ವಿಜಯಪುರ: ಆಲಮೇಲ ಪಟ್ಟಣದಲ್ಲಿ ಕೆಬಿಜೆಎನ್ಎಲ್ ಹೊಲಗಾಲುವೆ ವಿಭಾಗದ ಅಧಿಕಾರಿಗಳು ಹಾಗೂ ಸಿಬ್ಬಂದಿ ಕರ್ತವ್ಯದ ವೇಳೆಯಲ್ಲೇ ಡಾಬಾದಲ್ಲಿ ಮದ್ಯಪಾನ ಮಾಡುತ್ತಿರುವ ವಿಡಿಯೋ ವೈರಲ್ ಆಗಿದ್ದು, ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ. ಕಚೇರಿ ಸಮಯದಲ್ಲಿ ಕರ್ತವ್ಯ ನಿರ್ಲಕ್ಷ್ಯ ತೋರಿರುವ ಆರೋಪದಡಿ ಸಂಬಂಧಪಟ್ಟವರ ವಿರುದ್ಧ ತನಿಖೆ ನಡೆಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.
ವೈರಲ್ ದೃಶ್ಯದಲ್ಲಿ ಹೊಲಗಾಲುವೆ ವಿಭಾಗದ ಮ್ಯಾನೇಜರ್ ಶಶಿಧರ್ ಚೌಹಾನ್, ದ್ವಿತೀಯ ದರ್ಜೆ ಸಹಾಯಕ ಮುರಳಿದರ್ ಕುಲಕರ್ಣಿ ಹಾಗೂ ಸಿಪಾಯಿ ಶಂಕರಯ್ಯ ಕಾಣಿಸಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಅಧಿಕಾರಿಗಳು ಮಧ್ಯಾಹ್ನ ವೇಳೆಯಲ್ಲಿ ಕಚೇರಿಗೆ ಗೈರಾಗುವುದು ಸಾಮಾನ್ಯವಾಗಿದ್ದು, ಬಾರ್ ಮತ್ತು ಡಾಬಾಗಳಲ್ಲಿ ಸಮಯ ಕಳೆಯುತ್ತಾರೆ ಎಂಬ ಆರೋಪವೂ ಕೇಳಿಬಂದಿದೆ.
ಇದರ ಮಧ್ಯೆ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಕಡಗಂಚಿ ಗ್ರಾಮದ ದೇವರಾಜ ಅರಸು ಹಿಂದುಳಿದ ವರ್ಗಗಳ ವಿದ್ಯಾರ್ಥಿನಿಯರ ಹಾಸ್ಟೆಲ್ ವಿವಾದವೂ ಮತ್ತೆ ಚರ್ಚೆಗೆ ಬಂದಿದೆ. ವಿದ್ಯಾರ್ಥಿನಿಯರು ತಡರಾತ್ರಿ ಹುಡುಗರ ಜೊತೆ ಮದ್ಯಪಾನ ಪಾರ್ಟಿ ನಡೆಸಿರುವ ಆರೋಪ ಕೇಳಿಬಂದಿದ್ದರೆ, ಪ್ರಕರಣವನ್ನು ಮುಚ್ಚಿಹಾಕಲು ವಾರ್ಡನ್ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾದ ಆಡಿಯೋ ಕೂಡ ವೈರಲ್ ಆಗಿತ್ತು.
ಎರಡೂ ಪ್ರಕರಣಗಳು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ನಿಷ್ಪಕ್ಷಪಾತ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹ ಬಲವಾಗಿ ಕೇಳಿಬರುತ್ತಿದೆ.

