Home Blog

ರೌಡಿಪಟ್ಟಿಯಿಂದ 66 ಮಂದಿಯ ಹೆಸರು ಕೈಬಿಟ್ಟ ಪ್ರಕರಣ: ಪೊಲೀಸ್ ಆಯುಕ್ತ ಸೀಮಾಂತ್ ಕುಮಾರ್ ಸಿಂಗ್ ಹೇಳಿದ್ದೇನು..?

ಬೆಂಗಳೂರು: ರೌಡಿಪಟ್ಟಿಯಿಂದ 66 ಮಂದಿಯ ಹೆಸರು ಕೈಬಿಟ್ಟಿರುವ ಪ್ರಕರಣದ ಕುರಿತು ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಾಂತ್ ಕುಮಾರ್ ಸಿಂಗ್ ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಸೈಲೆಂಟ್ ಸುನಿಲ್, ಒಂಟೆ ರೋಹಿತ್ ಸೇರಿದಂತೆ ಒಟ್ಟು 66 ಮಂದಿಯ ಹೆಸರನ್ನು ರೌಡಿಪಟ್ಟಿಯಿಂದ ಕೈಬಿಡಲಾಗಿದೆ ಎಂಬ ಮಾಹಿತಿ ಇದೆ. ಬೆಂಗಳೂರಿನಲ್ಲಿ ಮಾತ್ರ 7 ಮಂದಿಯ ಹೆಸರು ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದು ಹೇಳಿದರು.

ಇನ್ನೂ ಐದು ಮಂದಿಗೆ ಸಂಬಂಧಿಸಿದಂತೆ ಪೊಲೀಸ್ ದೂರು ಪ್ರಾಧಿಕಾರದಿಂದ ನೋಟಿಸ್ ಬಂದಿದ್ದು, ಆ ಎಲ್ಲ ದಾಖಲೆಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ. ಇದುವರೆಗೆ ಯಾವುದೇ ಹೊಸ ಕಡತ (New File) ಸೃಷ್ಟಿಯಾಗಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಈ ವಿಚಾರ ಅತ್ಯಂತ ಸೂಕ್ಷ್ಮವಾಗಿದ್ದು, ನ್ಯಾಯಾಲಯದಲ್ಲಿಯೂ ಪ್ರಕರಣ ಇರುವುದರಿಂದ ಹೆಚ್ಚಿನ ಪ್ರತಿಕ್ರಿಯೆ ನೀಡಲು ಸಾಧ್ಯವಿಲ್ಲ. ಪೊಲೀಸ್ ಮಹಾನಿರ್ದೇಶಕರು (ಡಿಜಿ & ಐಜಿಪಿ) ಅವರೊಂದಿಗೆ ಚರ್ಚಿಸಿ, ಕಾನೂನು ಸಲಹೆ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುವುದು ಹಾಗೂ ಅಗತ್ಯವಿದ್ದರೆ ಮೇಲ್ಮನವಿ ಸಲ್ಲಿಸಲಾಗುವುದು ಎಂದು ಆಯುಕ್ತರು ತಿಳಿಸಿದರು.

ರೌಡಿಗಳನ್ನು ನಿಯಂತ್ರಿಸುವ ವಿಧಾನ ಪೊಲೀಸರಿಗೆ ತಿಳಿದಿದ್ದು, ರೌಡಿ ಪರೇಡ್ ಎಂಬುದು ಕೇವಲ ಒಂದು ಹಂತ ಮಾತ್ರ ಎಂದು ಹೇಳಿದರು. ಅಲ್ಲದೆ, ಯಾವ ಕಾರಣಕ್ಕೆ ರೌಡಿಪಟ್ಟಿಯಿಂದ ಹೆಸರು ಕೈಬಿಡಲಾಗಿದೆ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಸಂಗ್ರಹಿಸಲಾಗುವುದು. ಮಾರ್ಗಸೂಚಿಗಳನ್ನು ಪಾಲಿಸದೇ ಈ ಕ್ರಮ ಕೈಗೊಳ್ಳಲಾಗಿದೆಯೇ ಎಂಬ ಆರೋಪದ ಬಗ್ಗೆಯೂ ಸಮಗ್ರ ಪರಿಶೀಲನೆ ನಡೆಸಲಾಗುವುದು ಎಂದು ಸೀಮಾಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

ಮೆಡಿಕಲ್ ಅಂಗಡಿಗಳಲ್ಲಿ ಇನ್ಮುಂದೆ ಸಿರಪ್ ಖರೀದಿಗೆ ಹೊಸ ನಿಯಮ: ಕೇಂದ್ರ ಸರ್ಕಾರದಿಂದ ಮಹತ್ವದ ಆದೇಶ ಜಾರಿ

0

ನವದೆಹಲಿ: ಔಷಧಿಗಳ ದುರುಪಯೋಗ ತಡೆ ಹಾಗೂ ನಿಯಂತ್ರಣ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಕೇಂದ್ರ ಆರೋಗ್ಯ ಇಲಾಖೆ ಮಹತ್ವದ ನಿರ್ಧಾರ ಕೈಗೊಂಡಿದ್ದು, ಇನ್ಮುಂದೆ ವೈದ್ಯರ ಪ್ರಿಸ್ಕ್ರಿಪ್ಷನ್ ಇಲ್ಲದೆ ಯಾವುದೇ ಸಿರಪ್ ಖರೀದಿಸಲು ಅವಕಾಶ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

ಕೇಂದ್ರ ಸರ್ಕಾರ 1945ರ ಔಷಧ ನಿಯಮಾವಳಿಗಳಿಗೆ ತಿದ್ದುಪಡಿ ತಂದಿದ್ದು, ವೇಳಾಪಟ್ಟಿ-K ಅಡಿಯಲ್ಲಿ ವಿನಾಯಿತಿ ಪಡೆದ ಔಷಧಿಗಳ ಪಟ್ಟಿಯಿಂದ ‘ಸಿರಪ್ಗಳು’ ಎಂಬ ವರ್ಗವನ್ನು ತೆಗೆದುಹಾಕಿದೆ. ಇದರೊಂದಿಗೆ ಸಿರಪ್ ಆಧಾರಿತ ಔಷಧಿಗಳ ಮಾರಾಟದ ಮೇಲೆ ಕಠಿಣ ನಿಯಂತ್ರಣ ಜಾರಿಯಾಗಲಿದೆ.

ಹೊಸ ನಿಯಮದ ಪ್ರಕಾರ, ಕೆಮ್ಮಿನ ಸಿರಪ್ ಸೇರಿದಂತೆ ಯಾವುದೇ ರೀತಿಯ ಸಿರಪ್‌ಗಳನ್ನು ವೈದ್ಯರ ಶಿಫಾರಸು ಇಲ್ಲದೆ ಮೆಡಿಕಲ್ ಶಾಪ್‌ಗಳಿಂದ ಖರೀದಿಸಲು ಸಾಧ್ಯವಾಗುವುದಿಲ್ಲ. ಔಷಧ ಮಾರಾಟಗಾರರು ಕೂಡ ನೋಂದಾಯಿತ ವೈದ್ಯಕೀಯ ತಜ್ಞರ ಪ್ರಿಸ್ಕ್ರಿಪ್ಷನ್ ಇಲ್ಲದೆ ಸಿರಪ್ ವಿತರಿಸದಂತೆ ಸೂಚಿಸಲಾಗಿದೆ.

ಇಲ್ಲಿಯವರೆಗೆ ಕೆಮ್ಮು, ಶೀತ, ಜ್ವರ ಸೇರಿದಂತೆ ವಿವಿಧ ಆರೋಗ್ಯ ಸಮಸ್ಯೆಗಳಿಗೆ ಬಳಸುವ ಅನೇಕ ಸಿರಪ್‌ಗಳನ್ನು ಸಾರ್ವಜನಿಕರು ವೈದ್ಯರನ್ನು ಸಂಪರ್ಕಿಸದೆ ನೇರವಾಗಿ ಔಷಧ ಅಂಗಡಿಗಳಿಂದ ಖರೀದಿಸುತ್ತಿದ್ದರು. ಆದರೆ ಹೊಸ ತಿದ್ದುಪಡಿ ಜಾರಿಯಾದ ಬಳಿಕ ಈ ಪದ್ಧತಿಗೆ ತೆರೆ ಬೀಳಲಿದೆ.

ಹೀಗಾಗಿ ಕೆಮ್ಮು, ಶೀತ, ಜ್ವರ ಅಥವಾ ಇತರ ಕಾಯಿಲೆಗಳ ಚಿಕಿತ್ಸೆಗೆ ಸಿರಪ್ ಆಧಾರಿತ ಔಷಧಿಗಳ ಅಗತ್ಯವಿದ್ದರೆ ಮೊದಲು ವೈದ್ಯರನ್ನು ಸಂಪರ್ಕಿಸಿ ಪ್ರಿಸ್ಕ್ರಿಪ್ಷನ್ ಪಡೆಯುವುದು ಕಡ್ಡಾಯವಾಗಲಿದೆ. ಈ ಕ್ರಮವು ಔಷಧಿಗಳ ಅನಗತ್ಯ ಬಳಕೆ ಹಾಗೂ ದುರುಪಯೋಗವನ್ನು ತಡೆಗಟ್ಟಲು ಸಹಕಾರಿಯಾಗಲಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಸುರಕ್ಷತಾ ನಿಯಮ ಉಲ್ಲಂಘಿಸಿದ್ದೆ ಮೈಸೂರಿನ ಪಬ್‌ ಅಗ್ನಿ ದುರಂತಕ್ಕೆ ಕಾರಣ

0

ಮೈಸೂರು: ರಿಂಗ್ ರಸ್ತೆಯಲ್ಲಿರುವ ಫಾಕ್ಸ್ಡೆನ್ ಲಿಕ್ಕರ್ ಗ್ಯಾರೇಜ್ ಪಬ್‌ನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಇಬ್ಬರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ. ಘಟನೆಯ ನಂತರ ಪಬ್ ಮಾಲೀಕ ಹಾಗೂ ನಟ ಪ್ರೀತಂ ಪುನೀತ್ ಅವರ ನಿರ್ಲಕ್ಷ್ಯವೇ ದುರಂತಕ್ಕೆ ಕಾರಣವೇ ಎಂಬ ಪ್ರಶ್ನೆ ಎದ್ದಿದೆ.

ಪಬ್‌ನಲ್ಲಿ ಅಗ್ನಿ ಸುರಕ್ಷತಾ ನಿಯಮಗಳನ್ನು ಪಾಲಿಸಿಲ್ಲ ಎಂಬ ಆರೋಪ ಕೇಳಿಬಂದಿದ್ದು, ಲೈಸೆನ್ಸ್ ಅವಧಿ ಮುಗಿದಿದ್ದರೂ ನವೀಕರಣ ಮಾಡಿಸದೇ ವ್ಯವಹಾರ ನಡೆಸಲಾಗುತ್ತಿತ್ತು ಎಂಬ ಮಾಹಿತಿ ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಜೊತೆಗೆ ಫೈರ್ ಎಕ್ಸಿಟ್ ಇಲ್ಲದಿರುವುದು ಹಾಗೂ ಅಗ್ನಿಶಾಮಕ ವ್ಯವಸ್ಥೆ ಕೊರತೆಯೂ ಕಂಡುಬಂದಿದೆ.

ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿರಬಹುದೆಂಬ ಶಂಕೆಯಿದ್ದು, ಕೆಲವೇ ಕ್ಷಣಗಳಲ್ಲಿ ಬೆಂಕಿ ಮೇಲ್ಮಹಡಿಗೆ ವ್ಯಾಪಿಸಿದೆ. ಒಳಾಂಗಣದಲ್ಲಿ ಮರದ ಅಲಂಕಾರ ಮತ್ತು ಸುಲಭವಾಗಿ ಹೊತ್ತಿಕೊಳ್ಳುವ ವಸ್ತುಗಳಿದ್ದ ಕಾರಣ ಅವಘಡ ತೀವ್ರಗೊಂಡಿದೆ.

ಘಟನೆಯಲ್ಲಿ ಸಾಹಿನ್ (ಡಾರ್ಜಿಲಿಂಗ್) ಹಾಗೂ ಪ್ರಕಾಶ್ (ನೇಪಾಳ) ಮೃತಪಟ್ಟಿದ್ದು, ಹಲವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ 15ಕ್ಕೂ ಹೆಚ್ಚು ಮಂದಿಯನ್ನು ರಕ್ಷಿಸಿದ್ದಾರೆ. ಪ್ರಕರಣದ ಕುರಿತು ತನಿಖೆ ಮುಂದುವರಿದಿದೆ.

ಪೋಷಕರು ಕೆಲಸಕ್ಕೆ ಹೋದಾಗ ಶೆಡ್‌ಗೆ ನುಗ್ಗಿದ ಕಾಮುಕ: ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ- ಆರೋಪಿ ಬಂಧನ

0

ರಾಯಚೂರು ಜಿಲ್ಲೆ: ಜಿಲ್ಲೆಯ ಸಿಂಧನೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. 8 ಹಾಗೂ 9 ವರ್ಷದ ಸಹೋದರಿಯರ ಮೇಲೆ ನಡೆದ ಈ ಕೃತ್ಯ ಸ್ಥಳೀಯರಲ್ಲಿ ಆಕ್ರೋಶ ಹುಟ್ಟಿಸಿದೆ.

ಪೊಲೀಸ್ ಮಾಹಿತಿ ಪ್ರಕಾರ, ಬಡ ಕುಟುಂಬದ ಪೋಷಕರು ಕೂಲಿ ಕೆಲಸಕ್ಕೆ ತೆರಳಿದ್ದ ವೇಳೆ, ಕುಟುಂಬಕ್ಕೆ ಪರಿಚಯಸ್ಥನಾಗಿದ್ದ 30 ವರ್ಷದ ಬಾಬಾ ಎಂಬ ವ್ಯಕ್ತಿ ಶೆಡ್‌ಗೆ ನುಗ್ಗಿ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಆರೋಪಿ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದಾನೆ ಎಂದು ತಿಳಿದುಬಂದಿದೆ.

ಘಟನೆ ಸಂಬಂಧ ಸಿಂಧನೂರು ನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೊ, ಅತ್ಯಾಚಾರ ಹಾಗೂ ಜಾತಿನಿಂದನೆ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ತನಿಖೆ ಮುಂದುವರಿದಿದೆ.

ಫೇಸ್ ಬುಕ್, OLXನಲ್ಲಿ ಬೈಕ್ ಖರೀದಿಸುವ ಮುನ್ನ ಎಚ್ಚರ: ಕದ್ದ ವಾಹನ ಮಾರಾಟ ಮಾಡುತ್ತಿದ್ದ ಆರೋಪಿ ಅರೆಸ್ಟ್!

ಬೆಂಗಳೂರು: ಫೇಸ್‌ಬುಕ್ ಮತ್ತು ಓಎಲ್‌ಎಕ್ಸ್‌ನಲ್ಲಿ ಜಾಹೀರಾತು ನೀಡಿ ಕಳವು ಮಾಡಿದ ಬೈಕ್‌ಗಳನ್ನು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಜಯನಗರ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಸಲ್ಮಾನ್ ಮೆಹಬೂಬ್ @ ಬಿಲಾಲ್ ಎಂದು ಗುರುತಿಸಲಾಗಿದೆ. ಆರೋಪಿ ನಗರದ ವಿವಿಧ ಪ್ರದೇಶಗಳಲ್ಲಿ ಪಾರ್ಕಿಂಗ್ ಮಾಡಿದ್ದ ಬೈಕ್‌ಗಳನ್ನು ನಕಲಿ ಕೀ ಬಳಸಿ ಕಳವು ಮಾಡುತ್ತಿದ್ದ ಎನ್ನಲಾಗಿದೆ.

ಕಳವು ಮಾಡಿದ ಬೈಕ್‌ಗಳ ಮೂಲ ಗುರುತು ಸಿಗದಂತೆ ಅವುಗಳ ನಂಬರ್ ಪ್ಲೇಟ್ ಬದಲಾಯಿಸಿ, ಬಳಿಕ ಫೇಸ್‌ಬುಕ್ ಹಾಗೂ ಓಎಲ್‌ಎಕ್ಸ್‌ನಲ್ಲಿ ಜಾಹೀರಾತು ನೀಡಿ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದನು ಎಂದು ತನಿಖೆಯಲ್ಲಿ ತಿಳಿದುಬಂದಿದೆ.

ಜಯನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದು, ಆತನಿಂದ ₹22 ಲಕ್ಷ ಮೌಲ್ಯದ 37 ಬೈಕ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ಪ್ರಾಥಮಿಕ ತನಿಖೆಯಲ್ಲಿ ಆರೋಪಿಯ ವಿರುದ್ಧ ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಒಂದು ಬೈಕ್ ಕಳವು ಪ್ರಕರಣವೂ ಪತ್ತೆಯಾಗಿದೆ. ಪ್ರಕರಣ ಸಂಬಂಧ ಜಯನಗರ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

ಹೋಲ್ ಸೇಲ್ʼನಲ್ಲಿ ಚಿನ್ನ ಖರೀದಿಸುವ ನೆಪದಲ್ಲಿ ದರೋಡೆ: ಇಬ್ಬರ ಬಂಧನ – ₹1.64 ಕೋಟಿ ಮೌಲ್ಯದ ಚಿನ್ನ ವಶಕ್ಕೆ

ಬೆಂಗಳೂರು: ಹೋಲ್‌ಸೇಲ್‌ನಲ್ಲಿ ಚಿನ್ನ ಖರೀದಿಸುವುದಾಗಿ ನಂಬಿಸಿ ದರೋಡೆ ನಡೆಸಿದ್ದ ಮುಂಬೈ ಗ್ಯಾಂಗ್‌ನ ಇಬ್ಬರು ಆರೋಪಿಗಳನ್ನು ಮಲ್ಲೇಶ್ವರಂ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಪ್ರವೀಣ್ ಅಲಿಯಾಸ್ ಪಪ್ಪು ಹಾಗೂ ಪರೇಶ್ ಸೋನಿ ಎಂದು ಗುರುತಿಸಲಾಗಿದೆ. ಆರೋಪಿಗಳು ಮುಂಬೈನಿಂದ ಬೆಂಗಳೂರಿಗೆ ಬಂದು, ಕೇವಲ ಒಂದು ವಾರದ ಹಿಂದಷ್ಟೇ ಮಲ್ಲೇಶ್ವರಂ 3ನೇ ಕ್ರಾಸ್‌ನಲ್ಲಿ ಕಚೇರಿ ಆರಂಭಿಸಿ ತಮ್ಮ ಕೃತ್ಯಕ್ಕೆ ಸಂಚು ರೂಪಿಸಿದ್ದರು.

ಹೋಲ್‌ಸೇಲ್‌ನಲ್ಲಿ ಚಿನ್ನಾಭರಣ ಖರೀದಿಸುವುದಾಗಿ ಆನ್‌ಲೈನ್‌ನಲ್ಲಿ ಜಾಹೀರಾತು ನೀಡಿದ್ದ ಆರೋಪಿಗಳು, ಅದನ್ನು ನಂಬಿದ ಮೆಹ್ತಾ ಗೋಲ್ಡ್ ಸಂಸ್ಥೆಯ ಪ್ರತಿನಿಧಿಗಳನ್ನು ತಮ್ಮ ಕಚೇರಿಗೆ ಕರೆಸಿಕೊಂಡಿದ್ದರು. ಸುಮಾರು 3 ಕೆ.ಜಿ. ಚಿನ್ನಾಭರಣ ಮಾರಾಟಕ್ಕೆ ತರಿಸಿದ್ದ ವ್ಯಾಪಾರಿಗಳಿಂದ ಆಭರಣಗಳನ್ನು ಪರಿಶೀಲಿಸಿ ಫೋಟೋ ತೆಗೆದುಕೊಳ್ಳುವುದಾಗಿ ಹೇಳಿ ಒಳಗೆ ತೆಗೆದುಕೊಂಡು ಹೋಗಿದ್ದರು.

ಅನುಮಾನ ಬಾರದಂತೆ ಮೊದಲು ಸುಮಾರು ಒಂದೂವರೆ ಕೆ.ಜಿ. ಚಿನ್ನಾಭರಣವನ್ನು ಮಾತ್ರ ಒಳಗೆ ತೆಗೆದುಕೊಂಡು ಹೋಗಿ, ಅಲ್ಲಿಂದಲೇ ಪರಾರಿಯಾಗಿದ್ದರು. ಘಟನೆ ಸಂಬಂಧ ಮೆಹ್ತಾ ಗೋಲ್ಡ್ ಸಂಸ್ಥೆಯವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಮಲ್ಲೇಶ್ವರಂ ಪೊಲೀಸರು, ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಆರೋಪಿಗಳ ಪತ್ತೆಗಾಗಿ ಕಾರ್ಯಾಚರಣೆ ನಡೆಸಿದರು.

ಕಾರ್ಯಾಚರಣೆಯಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು, ಅವರಿಂದ ₹1.64 ಕೋಟಿ ಮೌಲ್ಯದ 1 ಕೆಜಿ 8 ಗ್ರಾಂ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿರುವ ಇನ್ನಿಬ್ಬರು ಆರೋಪಿಗಳಿಗಾಗಿ ಮಲ್ಲೇಶ್ವರಂ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದು, ತನಿಖೆ ನಡೆಯುತ್ತಿದೆ.

ನೀಟ್‌ ಪರೀಕ್ಷೆ ಹಿನ್ನೆಲೆ ಟೆಲಿಗ್ರಾಂ ಆ್ಯಪ್‌‌ʼಗೆ ನಿರ್ಬಂಧ: ಕೇಂದ್ರ ಸರ್ಕಾರ ಆದೇಶ

0

ನವದೆಹಲಿ: NEET-UG 2026 ಮರುಪರೀಕ್ಷೆಯ ಪಾರದರ್ಶಕತೆ ಮತ್ತು ಭದ್ರತೆ ಕಾಪಾಡುವ ಉದ್ದೇಶದಿಂದ ಕೇಂದ್ರ ಸರ್ಕಾರ ದೇಶಾದ್ಯಂತ ಟೆಲಿಗ್ರಾಂ ಅಪ್ಲಿಕೇಶನ್‌ಗೆ ಜೂನ್ 22ರವರೆಗೆ ತಾತ್ಕಾಲಿಕ ನಿರ್ಬಂಧ ವಿಧಿಸಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಶಿಫಾರಸಿನ ಮೇರೆಗೆ ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 69A ಅಡಿಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ಇದರ ಜೊತೆಗೆ, ಟೆಲಿಗ್ರಾಂನಲ್ಲಿರುವ Message Editing ವೈಶಿಷ್ಟ್ಯವನ್ನು ಜೂನ್ 30ರವರೆಗೆ ಸ್ಥಗಿತಗೊಳಿಸುವಂತೆ ಸೂಚಿಸಲಾಗಿದೆ. ಈಗಾಗಲೇ ಪ್ರಕಟಿಸಿರುವ ಸಂದೇಶಗಳನ್ನು ಬಳಿಕ ತಿದ್ದುಪಡಿ ಮಾಡಿ ಪ್ರಶ್ನೆಪತ್ರಿಕೆ ಸೋರಿಕೆಯ ನಕಲಿ ಸಾಕ್ಷ್ಯ ಸೃಷ್ಟಿಸುವ ಸಾಧ್ಯತೆಯನ್ನು ತಡೆಯುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ವರದಿಗಳು ತಿಳಿಸಿವೆ.

ಇತ್ತೀಚಿನ ವಾರಗಳಲ್ಲಿ ‘Paper Leaked NEET’, ‘Re-NEET 2026’, ‘Private Mafia’ ಹಾಗೂ ‘REE NEET MAFIAA’ ಸೇರಿದಂತೆ ಹಲವು ಟೆಲಿಗ್ರಾಂ ಚಾನೆಲ್‌ಗಳು ಪ್ರಶ್ನೆಪತ್ರಿಕೆ ಸೋರಿಕೆ ಸಂಬಂಧದ ದಾವೆಗಳನ್ನು ಹರಡುತ್ತಿದ್ದವು. ಈ ಕುರಿತು NTA ಹಾಗೂ ಶಿಕ್ಷಣ ಸಚಿವಾಲಯ ಕೇಂದ್ರ ಸರ್ಕಾರದ ಗಮನಕ್ಕೆ ತಂದಿದ್ದರಿಂದ ಟೆಲಿಗ್ರಾಂ ಮೇಲೆ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ.

ಈ ಹಿಂದೆ ನಡೆದ NEET-UG 2026 ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ರದ್ದುಗೊಳಿಸಲಾಗಿತ್ತು. ಪರಿಣಾಮ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಅನಿಶ್ಚಿತತೆ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ಜೂನ್ 21ರಂದು ನಡೆಯಲಿರುವ ಮರುಪರೀಕ್ಷೆಯನ್ನು ಯಾವುದೇ ಅಕ್ರಮವಿಲ್ಲದೆ ನಡೆಸಲು NTA ವಿಶೇಷ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ.

ಮರುಪರೀಕ್ಷೆಗೆ ಸಂಬಂಧಿಸಿದಂತೆ ಯಾವುದೇ ಅನುಮಾನಾಸ್ಪದ ಚಟುವಟಿಕೆಗಳು, ನಕಲಿ ಪ್ರಶ್ನೆಪತ್ರಿಕೆ, ಹಣ ಪಡೆದು ಫಲಿತಾಂಶ ಕೊಡಿಸುವ ಭರವಸೆ ಅಥವಾ ಪರೀಕ್ಷಾ ಅಕ್ರಮಗಳ ಬಗ್ಗೆ ಮಾಹಿತಿ ದೊರೆತಲ್ಲಿ ತಕ್ಷಣವೇ ವರದಿ ಮಾಡುವಂತೆ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ NTA ಮನವಿ ಮಾಡಿದೆ. ಈ ಉದ್ದೇಶಕ್ಕಾಗಿ ವಿಶೇಷ ದೂರು ಪೋರ್ಟಲ್‌ನ್ನೂ ಆರಂಭಿಸಲಾಗಿದೆ.

NTA ಪ್ರಕಟಿಸಿರುವ ಮಾರ್ಗಸೂಚಿಗಳ ಪ್ರಕಾರ, NEET (UG) 2026 ಪ್ರಶ್ನೆಪತ್ರಿಕೆ ಅಥವಾ ಉತ್ತರ ಕೀ ದೊರಕಿಸುವುದಾಗಿ ಹೇಳುವ ಅನಧಿಕೃತ ವೆಬ್‌ಸೈಟ್‌ಗಳು, ಸಾಮಾಜಿಕ ಜಾಲತಾಣ ಖಾತೆಗಳು, ಮೆಸೇಜಿಂಗ್ ಚಾನೆಲ್‌ಗಳು, ನಕಲಿ ಅಧಿಕಾರಿಗಳು ಹಾಗೂ ಪ್ರಶ್ನೆಪತ್ರಿಕೆ ಸೋರಿಕೆ ಹೆಸರಿನಲ್ಲಿ ಹಣ ವಸೂಲಿ ಮಾಡುವ ವ್ಯಕ್ತಿಗಳು ಅಥವಾ ಗುಂಪುಗಳ ಕುರಿತು ಸಾರ್ವಜನಿಕರು ಮಾಹಿತಿ ನೀಡಬಹುದು.

ಯಾವುದೇ ಕಾರಣಕ್ಕೂ ಈ ಬಾರಿ ಪ್ರಶ್ನೆಪತ್ರಿಕೆ ಸೋರಿಕೆಗೆ ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿರುವ NTA, ವಿದ್ಯಾರ್ಥಿಗಳು ನಕಲಿ ವೆಬ್‌ಸೈಟ್‌ಗಳು, ಸುಳ್ಳು ಪ್ರಚಾರಗಳು ಹಾಗೂ ವಂಚಕರ ಬಗ್ಗೆ ಎಚ್ಚರಿಕೆಯಿಂದಿರಬೇಕು ಎಂದು ಸೂಚಿಸಿದೆ. ಪರೀಕ್ಷೆಯ ಸಮಗ್ರತೆ ಮತ್ತು ವಿಶ್ವಾಸಾರ್ಹತೆಯನ್ನು ಕಾಪಾಡಲು ಎಲ್ಲ ಅಗತ್ಯ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಸಂಸ್ಥೆ ಭರವಸೆ ನೀಡಿದೆ.

ಟೆಸ್ಟ್ ಡ್ರೈವ್ ನೆಪದಲ್ಲಿ ಬೈಕ್ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ!

0

ಬೆಂಗಳೂರು: ಬೈಕ್ ಖರೀದಿಸುವ ನೆಪದಲ್ಲಿ ಶೋರೂಂಗಳಿಗೆ ತೆರಳಿ ಟೆಸ್ಟ್ ಡ್ರೈವ್ ಕೇಳಿ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಇಬ್ಬರು ಖದೀಮರನ್ನು ಸಂಪಿಗೆಹಳ್ಳಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಗಳನ್ನು ಮೊಹಮ್ಮದ್ ಉಮರ್ ಸಾಧಿಕ್ ಹಾಗೂ ಸೈಯದ್ ಉಮರ್ ಎಂದು ಗುರುತಿಸಲಾಗಿದೆ. ಆರೋಪಿಗಳು ಬೈಕ್ ಖರೀದಿಸುವುದಾಗಿ ನಂಬಿಸಿ ಶೋರೂಂಗಳಿಗೆ ತೆರಳಿ ಟೆಸ್ಟ್ ಡ್ರೈವ್‌ಗೆ ವಾಹನ ಪಡೆದುಕೊಳ್ಳುತ್ತಿದ್ದರು.

ತಮ್ಮೊಂದಿಗೆ ಅರ್ಧ ಲೀಟರ್ ಪೆಟ್ರೋಲ್ ಕೂಡ ತೆಗೆದುಕೊಂಡು ಹೋಗುತ್ತಿದ್ದ ಅವರು, ಸ್ವಲ್ಪ ದೂರ ಸಾಗಿದ ಬಳಿಕ ವಾಹನಕ್ಕೆ ಪೆಟ್ರೋಲ್ ತುಂಬಿಸಿ ಸ್ಥಳದಿಂದ ಪರಾರಿಯಾಗುತ್ತಿದ್ದರು ಎಂದು ತನಿಖೆಯಲ್ಲಿ ತಿಳಿದುಬಂದಿದೆ.

ಇದರ ಜೊತೆಗೆ, ಹ್ಯಾಂಡ್ ಲಾಕ್ ಮುರಿದು ಬೈಕ್ ಕಳವು ಮಾಡುವ ಪ್ರಕರಣಗಳಲ್ಲಿಯೂ ಆರೋಪಿಗಳ ಪಾತ್ರವಿರುವುದು ಬೆಳಕಿಗೆ ಬಂದಿದೆ. ಬಂಧಿತರಿಂದ ಒಟ್ಟು ₹15 ಲಕ್ಷ ಮೌಲ್ಯದ 23 ಬೈಕ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಈ ಸಂಬಂಧ ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ವಿರುದ್ಧ ಹೆಚ್ಚಿನ ತನಿಖೆಯನ್ನು ಪೊಲೀಸರು ಮುಂದುವರಿಸಿದ್ದಾರೆ.

ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ಹಳದಿ ಮಾರ್ಗಕ್ಕೆ 13ನೇ ರೈಲು, ಶೀಘ್ರದಲ್ಲೇ 5 ನಿಮಿಷಕ್ಕೊಮ್ಮೆ ಸೇವೆ ಲಭ್ಯ

ಬೆಂಗಳೂರು: ನಗರದ ಸಂಚಾರ ದಟ್ಟಣೆಗೆ ಪರಿಣಾಮಕಾರಿ ಪರಿಹಾರವಾಗಿ ಪರಿಗಣಿಸಲಾಗುತ್ತಿರುವ ನಮ್ಮ ಮೆಟ್ರೋದ ಹಳದಿ ಮಾರ್ಗ (ಆರ್.ವಿ. ರಸ್ತೆ–ಬೊಮ್ಮಸಂದ್ರ)ಕ್ಕೆ ಮತ್ತೊಂದು ಹೊಸ ರೈಲು ಸೇರ್ಪಡೆಯಾಗಿದೆ. ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಸೋಮವಾರ 13ನೇ ಮೆಟ್ರೋ ರೈಲನ್ನು ಸ್ವಾಗತಿಸಿದ್ದು, ಹಳದಿ ಮಾರ್ಗದ ಕಾರ್ಯಾಚರಣಾ ಸಾಮರ್ಥ್ಯವನ್ನು ಮತ್ತಷ್ಟು ವಿಸ್ತರಿಸುವತ್ತ ಮಹತ್ವದ ಹೆಜ್ಜೆ ಇಟ್ಟಿದೆ.

ಆರು ಕೋಚ್‌ಗಳನ್ನು ಒಳಗೊಂಡಿರುವ ಈ ಹೊಸ ರೈಲು ಸೋಮವಾರ ಹೆಬ್ಬಗೋಡಿ ಡಿಪೋಗೆ ತಲುಪಿದೆ. ಸದ್ಯ ಕೋಚ್‌ಗಳನ್ನು ಟ್ರೈಲರ್‌ಗಳಿಂದ ಇಳಿಸುವ ಕಾರ್ಯ ನಡೆಯುತ್ತಿದ್ದು, ನಂತರ ಅವುಗಳನ್ನು ಜೋಡಿಸಿ ಸ್ಟ್ಯಾಟಿಕ್ ಟೆಸ್ಟಿಂಗ್‌ಗಾಗಿ ಇನ್ಸ್‌ಪೆಕ್ಷನ್ ಬೇ ಲೈನ್‌ (IBL)ಗೆ ಕರೆದೊಯ್ಯಲಾಗುತ್ತದೆ.

ಸಾರ್ವಜನಿಕ ಸೇವೆಗೆ ಮುನ್ನ ರೈಲು ಕಡ್ಡಾಯವಾಗಿ ವಿವಿಧ ತಾಂತ್ರಿಕ ಪರೀಕ್ಷೆಗಳನ್ನು ಪೂರ್ಣಗೊಳಿಸಬೇಕಿದ್ದು, ಮುಖ್ಯ ಮಾರ್ಗದಲ್ಲಿ ಸುಮಾರು 750 ಕಿಲೋಮೀಟರ್‌ಗಳ ಪರೀಕ್ಷಾರ್ಥ ಸಂಚಾರ ನಡೆಸಲಾಗುತ್ತದೆ. ಮೆಟ್ರೋ ಸೇವೆಗೆ ಅಡಚಣೆ ಉಂಟಾಗದಂತೆ ಈ ಪರೀಕ್ಷಾ ಕಾರ್ಯಗಳನ್ನು ರಾತ್ರಿ ವೇಳೆಯಲ್ಲೇ ಕೈಗೊಳ್ಳಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹಳದಿ ಮಾರ್ಗದ ಮೊದಲ ವಾರ್ಷಿಕೋತ್ಸವ ಆಗಸ್ಟ್ 11ರಂದು ಪೂರ್ಣಗೊಳ್ಳಲಿದ್ದು, ಆ ವೇಳೆಗೆ ಒಟ್ಟು 15 ರೈಲುಗಳು ಕಾರ್ಯಾಚರಣೆಗೆ ಸಜ್ಜಾಗಲಿವೆ. ಇದರಿಂದ ಪ್ರಯಾಣಿಕರ ನಿರೀಕ್ಷೆಯ ಅವಧಿ ಗಣನೀಯವಾಗಿ ಕಡಿಮೆಯಾಗಲಿದ್ದು, ಪೀಕ್ ಅವರ್‌ನಲ್ಲಿ ಪ್ರತಿ 5 ನಿಮಿಷಕ್ಕೊಮ್ಮೆ ಅಥವಾ ಅದಕ್ಕಿಂತ ಕಡಿಮೆ ಅವಧಿಯಲ್ಲಿ ರೈಲು ಸಂಚಾರ ನಡೆಸುವ ಗುರಿ ಹೊಂದಲಾಗಿದೆ.

ಇದಲ್ಲದೆ, ಒಟ್ಟು ರೈಲುಗಳಲ್ಲಿ ಎರಡು ರೈಲುಗಳನ್ನು ತುರ್ತು ಪರಿಸ್ಥಿತಿಗಳ ನಿರ್ವಹಣೆಗೆ ಮೀಸಲು ಸಂಗ್ರಹವಾಗಿ ಕಾಯ್ದಿರಿಸಲಾಗುತ್ತದೆ. ಹಳದಿ ಮಾರ್ಗದ ಅಗತ್ಯ ಪೂರೈಸಿದ ಬಳಿಕ ಟಿಆರ್‌ಎಸ್‌ಎಲ್ ಸಂಸ್ಥೆ ಪರ್ಪಲ್ ಹಾಗೂ ಗ್ರೀನ್ ಮಾರ್ಗಗಳಿಗಾಗಿ 18 ಹೊಸ ರೈಲುಗಳ ಪೂರೈಕೆಗೆ ಗಮನಹರಿಸಲಿದೆ.

ಇದೇ ವೇಳೆ, 2027ರೊಳಗೆ ಬೆಮೆಲ್ ಸಂಸ್ಥೆಯು ಹಳದಿ ಮಾರ್ಗಕ್ಕಾಗಿ ಹೆಚ್ಚುವರಿಯಾಗಿ ಆರು ರೈಲುಗಳನ್ನು ಪೂರೈಸುವ ನಿರೀಕ್ಷೆಯಿದ್ದು, ಭವಿಷ್ಯದಲ್ಲಿ ಪ್ರಯಾಣಿಕರ ಸಂಖ್ಯೆಯ ಹೆಚ್ಚಳಕ್ಕೆ ಅನುಗುಣವಾಗಿ ಮೆಟ್ರೋ ಸೇವೆಯನ್ನು ಮತ್ತಷ್ಟು ಬಲಪಡಿಸುವ ಯೋಜನೆ ರೂಪಿಸಲಾಗಿದೆ.

ಹಾರಂಗಿ ಜಲಾಶಯ ಒಳಹರಿವು ತೀವ್ರ ಕುಸಿತ: ರೈತರಲ್ಲಿ ಆತಂಕ

0

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆ ಕೊರತೆಯಿಂದ ಹಾರಂಗಿ ಜಲಾಶಯದ ನೀರಿನ ಒಳಹರಿವು ತೀವ್ರವಾಗಿ ಕುಸಿದಿದೆ. ಪರಿಣಾಮ ರೈತರು ಹಾಗೂ ಗ್ರಾಮೀಣ ಭಾಗಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಪ್ರಸ್ತುತ ಜಲಾಶಯಕ್ಕೆ 285 ಕ್ಯೂಸೆಕ್ ನೀರು ಮಾತ್ರ ಹರಿದು ಬರುತ್ತಿದ್ದು, 180 ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಒಳಹರಿವು ಹಾಗೂ ಹೊರಹರಿವು ಎರಡೂ ಹಲವು ಪಟ್ಟು ಹೆಚ್ಚಾಗಿತ್ತು.

8.5 ಟಿಎಂಸಿ ಸಾಮರ್ಥ್ಯದ ಜಲಾಶಯದಲ್ಲಿ ಈಗ ಕೇವಲ 3.0 ಟಿಎಂಸಿ ನೀರು ಸಂಗ್ರಹವಾಗಿದೆ. ಮಳೆ ಕೊರತೆ ಮುಂದುವರಿದರೆ ಕೃಷಿ ನೀರಾವರಿ ಹಾಗೂ ಕಾವೇರಿ ನದಿ ನೀರಿನ ಲಭ್ಯತೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.

ಸೋಮವಾರಪೇಟೆ, ಹಾಸನ ಮತ್ತು ಮೈಸೂರು ಭಾಗದ ಗ್ರಾಮೀಣ ಪ್ರದೇಶಗಳಲ್ಲಿಯೂ ನೀರಿನ ಕೊರತೆ ಕುರಿತ ಆತಂಕ ಹೆಚ್ಚಾಗಿದ್ದು, ಪರಿಸ್ಥಿತಿಯನ್ನು ರೈತರು ಕಣ್ಣಿಟ್ಟಿದ್ದಾರೆ.

error: Content is protected !!