Home Blog

ವಾಯುವ್ಯ ಸಾರಿಗೆಗೆ ಡೀಸೆಲ್ ದರ ಏರಿಕೆ ಬಳಿಕ ಮತ್ತೊಂದು ಶಾಕ್:‌ ಬಿಡಿಭಾಗ ಕೊರತೆ, ಬಸ್ ರಿಪೇರಿ ಸ್ಥಗಿತ

0

ಹುಬ್ಬಳ್ಳಿ, ಜೂನ್ 9: ಡೀಸೆಲ್ ದರ ಏರಿಕೆಯಿಂದ ಪ್ರತಿ ತಿಂಗಳು ಸುಮಾರು 4 ಕೋಟಿ ರೂ. ನಷ್ಟ ಅನುಭವಿಸುತ್ತಿರುವ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ಈಗ ಮತ್ತೊಂದು ಗಂಭೀರ ಬಿಕ್ಕಟ್ಟು ಎದುರಾಗಿದೆ. ಬಸ್‌ಗಳ ಬಿಡಿಭಾಗಗಳ ಬೆಲೆ ಗಗನಕ್ಕೇರಿರುವುದು ಹಾಗೂ ಪೂರೈಕೆ ಸಂಪೂರ್ಣ ಸ್ಥಗಿತಗೊಂಡಿರುವುದು ನಿಗಮದ ದೈನಂದಿನ ಕಾರ್ಯಾಚರಣೆಯನ್ನು ತೀವ್ರವಾಗಿ ಅಸ್ತವ್ಯಸ್ತಗೊಳಿಸಿದೆ.

ಸಾರಿಗೆ ಸಂಸ್ಥೆಯ ಅಡಿಯಲ್ಲಿ ಸುಮಾರು 5000ಕ್ಕೂ ಹೆಚ್ಚು ಬಸ್‌ಗಳು ಕಾರ್ಯನಿರ್ವಹಿಸುತ್ತಿದ್ದು, ಅವುಗಳ ನಿರ್ವಹಣೆಗೆ ಪ್ರತಿ ತಿಂಗಳು ಸುಮಾರು 8 ಕೋಟಿ ರೂ. ಬಿಡಿಭಾಗಗಳಿಗೆ ಖರ್ಚಾಗುತ್ತಿತ್ತು. ಆದರೆ ಇದೀಗ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ವಸ್ತುಗಳ ಬೆಲೆ ಏರಿಕೆಯ ನೆಪವೊಡ್ಡಿ ಟೆಂಡರ್‌ದಾರರು ಹಳೆಯ ಒಪ್ಪಂದದ ದರದಲ್ಲಿ ಟೈರ್, ನಟ್-ಬೋಲ್ಟ್, ಸ್ಟೀಲ್ ಹಾಗೂ ಮಾಲಿನ್ಯ ನಿಯಂತ್ರಣದ ‘ಆಡ್ ಬ್ಲೂ’ ಪೂರೈಕೆಯನ್ನು ನಿಲ್ಲಿಸಿದ್ದಾರೆ.

ದರ ಪರಿಷ್ಕರಣೆ ಬೇಡಿಕೆಯನ್ನು ಮುಂದಿಟ್ಟಿರುವ ಪೂರೈಕೆದಾರರು ಹೊಸ ದರ ನೀಡದ ಹೊರತು ಸರಬರಾಜು ಮುಂದುವರಿಸುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ. ಇದರ ಪರಿಣಾಮವಾಗಿ ಬಿಡಿಭಾಗಗಳ ಪೂರೈಕೆ ಸಂಪೂರ್ಣವಾಗಿ ಸ್ಥಗಿತಗೊಂಡಿದ್ದು, ಗ್ಯಾರೇಜ್‌ಗಳಲ್ಲಿ ಬಸ್ ರಿಪೇರಿ ಕಾರ್ಯ ವಿಳಂಬವಾಗುತ್ತಿದೆ.

ವಾಯುವ್ಯ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಾಂಕಾ ಎಂ. ಅವರ ಪ್ರಕಾರ, ಹಳೆಯ ದರಕ್ಕೆ ವಸ್ತುಗಳನ್ನು ನೀಡಲು ಪೂರೈಕೆದಾರರು ಒಪ್ಪುತ್ತಿಲ್ಲ. ಅವರನ್ನು ಮನವೊಲಿಸಿ ಅಗತ್ಯ ಬಿಡಿಭಾಗಗಳನ್ನು ಪಡೆಯುವುದು ದೊಡ್ಡ ಸವಾಲಾಗಿ ಪರಿಣಮಿಸಿದೆ.

ಶಕ್ತಿ ಯೋಜನೆಯಿಂದ ಬಸ್‌ಗಳ ಸಂಚಾರ ಹೆಚ್ಚಾದ ಹಿನ್ನೆಲೆಯಲ್ಲಿ ತಾಂತ್ರಿಕ ದೋಷಗಳ ಪ್ರಮಾಣವೂ ಹೆಚ್ಚಾಗಿದೆ. ಆದರೆ ರಿಪೇರಿಗೆ ಅಗತ್ಯವಾದ ಬಿಡಿಭಾಗಗಳ ಕೊರತೆಯಿಂದಾಗಿ ಬಸ್‌ಗಳು ಮಾರ್ಗ ಮಧ್ಯದಲ್ಲೇ ಕೆಟ್ಟು ನಿಲ್ಲುವ ಅಪಾಯ ಎದುರಾಗಿದೆ. ಆದಾಯ ಸ್ಥಿರವಾಗಿದ್ದರೂ ಖರ್ಚು ಹೆಚ್ಚುತ್ತಿರುವುದು ನಿಗಮವನ್ನು ಆರ್ಥಿಕ ಒತ್ತಡಕ್ಕೆ ತಳ್ಳಿದೆ.

 ಘೋರ ದುರಂತ: ಒಂದೇ ಕುಟುಂಬದ ಮೂವರು ಅನುಮಾನಾಸ್ಪದ ಸಾವು!

ಮಂಡ್ಯ: ಜಿಲ್ಲೆಯ ನೆಹರು ನಗರದಲ್ಲಿ ಒಂದೇ ಕುಟುಂಬದ ಮೂವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಮೃತರನ್ನು ಪ್ರಭಾಕರ್, ಅವರ ಪತ್ನಿ ಜ್ಯೋತಿ ಹಾಗೂ ಪುತ್ರ ಸಂತೋಷ್ ಎಂದು ಗುರುತಿಸಲಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಜ್ಯೋತಿ ಮತ್ತು ಸಂತೋಷ್ ಕಳೆದ ರಾತ್ರಿ ಮನೆಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಇವರ ಸಾವಿಗೆ ನಿಖರ ಕಾರಣ ಏನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಇದರ ಬೆನ್ನಲ್ಲೇ ಇಂದು ಬೆಳಿಗ್ಗೆ ಪ್ರಭಾಕರ್ ಅವರು ತಮ್ಮದೇ ಬಟ್ಟೆ ಅಂಗಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಒಂದೇ ಕುಟುಂಬದ ಮೂವರು ಅಲ್ಪಾವಧಿಯಲ್ಲೇ ಮೃತಪಟ್ಟಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಕುಟುಂಬದ ದುರಂತವನ್ನು ಮತ್ತಷ್ಟು ವಿಷಾದಕರವಾಗಿಸಿದ್ದು, ಮೃತ ಸಂತೋಷ್ ಅವರಿಗೆ ಕೇವಲ ಒಂದು ತಿಂಗಳ ಹಿಂದಷ್ಟೇ ವಿವಾಹವಾಗಿತ್ತು.

ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ಮಂಡ್ಯ ಪಶ್ಚಿಮ ಪೊಲೀಸ್ ಠಾಣೆ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಮಾಹಿತಿ ಸಂಗ್ರಹಿಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ವರದಿ ಬಂದ ಬಳಿಕ ಸಾವಿನ ನಿಖರ ಕಾರಣ ತಿಳಿಯುವ ಸಾಧ್ಯತೆ ಇದೆ.

ಪ್ರಕರಣದ ಎಲ್ಲ ಆಯಾಮಗಳನ್ನು ಪರಿಗಣಿಸಿ ತನಿಖೆ ನಡೆಸಲಾಗುತ್ತಿದ್ದು, ಇದು ಆತ್ಮಹತ್ಯೆ, ಆರೋಗ್ಯ ಸಮಸ್ಯೆ ಅಥವಾ ಇತರೆ ಕಾರಣಗಳಿಂದ ಸಂಭವಿಸಿರುವ ಘಟನೆ ಎಂಬುದರ ಕುರಿತು ಪೊಲೀಸರು ಪರಿಶೀಲನೆ ಮುಂದುವರಿಸಿದ್ದಾರೆ.

ಪೆದ್ದಿ ಚಿತ್ರದಿಂದ ವಿವಾದಾತ್ಮಕ ದೃಶ್ಯ ಕಟ್: ನಿರ್ದೇಶಕ ಬುಚ್ಚಿ ಕ್ಷಮೆಯಾಚನೆ

ರಾಮ್ ಚರಣ್ ಅಭಿನಯದ ‘ಪೆದ್ದಿ’ ಚಿತ್ರದಲ್ಲಿ ಜಾನ್ವಿ ಕಪೂರ್ ಪಾತ್ರದ ಚಿತ್ರಣದ ಕುರಿತು ಉಂಟಾದ ವಿವಾದದ ಬೆನ್ನಲ್ಲೇ ನಿರ್ದೇಶಕ ಬುಚ್ಚಿ ಬಾಬು ಸನಾ ಕ್ಷಮೆಯಾಚಿಸಿದ್ದಾರೆ. ಜೊತೆಗೆ ಟೀಕೆಗೆ ಗುರಿಯಾದ ಕೆಲವು ದೃಶ್ಯಗಳನ್ನು ಚಿತ್ರದಿಂದ ತೆಗೆದುಹಾಕಲಾಗಿದೆ.

ಚಿತ್ರದಲ್ಲಿ ಅಚಿಯಮ್ಮ ಪಾತ್ರವನ್ನು ಕೇವಲ ದೈಹಿಕ ಆಕರ್ಷಣೆಗೆ ಒತ್ತು ನೀಡುವ ರೀತಿಯಲ್ಲಿ ತೋರಿಸಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಈ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವಿರೋಧಕ್ಕೆ ಕಾರಣವಾಗಿದ್ದವು.

ಈ ಹಿನ್ನೆಲೆಯಲ್ಲಿ ನಿರ್ದೇಶಕರು, ಕೆಲವು ದೃಶ್ಯಗಳು ತಪ್ಪಾಗಿ ಅರ್ಥೈಸಿಕೊಳ್ಳುವಂತೆ ಮೂಡಿಬಂದಿರುವುದನ್ನು ಒಪ್ಪಿಕೊಂಡಿದ್ದಾರೆ. ಕಥೆಯ ನಿರ್ವಹಣೆಯಲ್ಲಿ ನಾಯಕನ ರಗಡ್ ಸ್ವಭಾವವನ್ನು ತೋರಿಸುವ ಉದ್ದೇಶವಿದ್ದರೂ, ಕೆಲವು ಭಾಗಗಳು ಪ್ರೇಕ್ಷಕರಿಗೆ ತಪ್ಪು ಸಂದೇಶ ನೀಡಿವೆ ಎಂದು ತಿಳಿಸಿದ್ದಾರೆ.

ವಿವಾದದ ನಂತರ ಆ ದೃಶ್ಯಗಳನ್ನು ಸಂಪೂರ್ಣವಾಗಿ ತೆಗೆದುಹಾಕಲಾಗಿದ್ದು, ಚಿತ್ರದ ತಂಡ ಕ್ಷಮೆಯಾಚಿಸಿದೆ. ಮಹಿಳಾ ಪಾತ್ರಗಳಿಗೆ ಗೌರವ ನೀಡುವುದು ತಮ್ಮ ಉದ್ದೇಶವಾಗಿದ್ದು, ಯಾರ ಭಾವನೆಗೂ ಧಕ್ಕೆ ತರುವ ಉದ್ದೇಶವಿರಲಿಲ್ಲ ಎಂದು ನಿರ್ದೇಶಕರು ಸ್ಪಷ್ಟಪಡಿಸಿದ್ದಾರೆ.

ಕಾಂಗ್ರೆಸ್ ಮುಖಂಡ ಸೂರಜ್ ಹೆಗ್ಡೆ ಅವರಿಗೆ ಸರ್ಕಾರಿ ಗೌರವಗಳೊಂದಿಗೆ ಅಂತಿಮ ವಿದಾಯ

ಬೆಂಗಳೂರು: ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ, ಅಧಿಕಾರಕ್ಕಿಂತ ಸಂಘಟನೆಗೆ ಆದ್ಯತೆ ನೀಡಿದ್ದ ಎಐಸಿಸಿ ಕಾರ್ಯದರ್ಶಿ, ರಾಜ್ಯ ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಸೂರಜ್ ಹೆಗ್ಡೆ ಅವರಿಗೆ ಮಂಗಳವಾರ ಸರಕಾರಿ ಗೌರವಗಳೊಂದಿಗೆ ಭಾವಪೂರ್ಣ ಅಂತಿಮ ವಿದಾಯ ಸಲ್ಲಿಸಲಾಯಿತು.

ಭಾನುವಾರ ರಾತ್ರಿ ಹೃದಯಾಘಾತದಿಂದ ನಿಧನರಾದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಸೂರಜ್ ಹೆಗ್ಡೆ ಅವರಿಗೆ ಲೋಕಸಭೆ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲ, ಸಿಎಂ ಡಿ.ಕೆ. ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್, ಮಾಜಿ ಸಿಎಂ, ಸಿಡಬ್ಲ್ಯೂಸಿ ಸದಸ್ಯರಾದ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರುಗಳು ಬಿಇಎಲ್ ರಸ್ತೆ ನಿವಾಸದಲ್ಲಿ ಅಂತಿಮ ನಮನ ಸಲ್ಲಿಸಿದರು.

ರಾಹುಲ್ ಗಾಂಧಿ ಅವರು ಸೂರಜ್ ಹೆಗಡೆ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು, ಪುಷ್ಪ ನಮನ ಸಲ್ಲಿಸಿದರು. ಸೂರಜ್ ಹೆಗ್ಡೆ ಅವರ ಪತ್ನಿ ಶಿಲ್ಪಾ, ಪುತ್ರರಾದ ಸಮೃಧ್, ವಿಶೃತ್ ಹಾಗೂ ಕುಟುಂಬ ಸದಸ್ಯರಿಗೆ ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ಮುಖಂಡರು ಸಾಂತ್ವನ ಹೇಳಿ, ಧೈರ್ಯ ತುಂಬಿದರು. ನಂತರ ಸೂರಜ್ ಹೆಗ್ಡೆ ಅವರ ನಿವಾಸದ ಬಳಿಯೇ ಸಕಲ ಸರ್ಕಾರಿ ಗೌರವವನ್ನು ಅರ್ಪಿಸಲಾಯಿತು.

ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿ ಪೊಲೀಸ್ ಬಂದೂಕು ಪಡೆ ಗೌರವ ಸಲ್ಲಿಸಿತು. ಬಳಿಕ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸೂರಜ್ ಅವರ ಪತ್ನಿ ಶಿಲ್ಪಾ ಅವರಿಗೆ ರಾಷ್ಟ್ರಧ್ವಜ ಹಸ್ತಾಂತರಿಸಿದರು. ಉಮ್ಮಳಿಸಿ ಬಂದ ದುಃಖ ತಾಳಲಾರದೇ ಬಿಕ್ಕಿ, ಬಿಕ್ಕಿ ಅಳುತ್ತಿದ್ದ ಅವರಿಗೆ ಸಾಂತ್ವನ ಹೇಳಿದರು. ಧ್ವಜ ಹಸ್ತಾಂತರದ ವೇಳೆ ಭಾವುಕರಾದ ಡಿ.ಕೆ.ಶಿವಕುಮಾರ್ ಅವರು ಇಡೀ ಪಕ್ಷ ನಿಮ್ಮ ದುಃಖದಲ್ಲಿ ಭಾಗಿಯಾಗಿದೆ, ನಿಮ್ಮ ಕುಟುಂಬದ ಜತೆ ನಾವಿದ್ದೇವೆ ಎಂದು ಸಂತೈಸಿದರು.

ಇದಕ್ಕೂ ಮೊದಲು ಸಿಎಂ ಡಿ.ಕೆ.ಶಿವಕುಮಾರ್ ಅವರು ಅಂತಿಮ ಗೌರವ ಸಲ್ಲಿಸಲು ಆಗಮಿಸಿದ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಜತೆ ಬರಮಾಡಿಕೊಂಡರು. ಅಂತಿಮ ನಮನದ ನಂತರ ವಿಮಾನ ನಿಲ್ದಾಣಕ್ಕೆ ಮತ್ತೆ ತೆರಳಿ ಬೀಳ್ಕೊಟ್ಟರು.

ಬಿಜೆಪಿ ಮುಖಂಡ ಕಾರ್ತಿಕೇಯ ಘೋರ್ಪಡೆ ಇನ್ನಿಲ್ಲ: ಇಂದು ಸಂಡೂರಿನಲ್ಲಿ ಅಂತ್ಯಕ್ರಿಯೆ

ಬಳ್ಳಾರಿ: ಸಂಡೂರು ರಾಜವಂಶಕ್ಕೆ ಸೇರಿದ ಹಾಗೂ ಬಿಜೆಪಿ ಮುಖಂಡರಾಗಿದ್ದ ಕಾರ್ತಿಕೇಯ ಘೋರ್ಪಡೆ ಅವರು ಇಂದು ನಿಧನರಾಗಿದ್ದಾರೆ. ಬೆಂಗಳೂರಿನಲ್ಲಿರುವ ತಮ್ಮ ನಿವಾಸದಲ್ಲಿ ಇಂದು ಬೆಳಿಗ್ಗೆ ಸುಮಾರು 6 ಗಂಟೆ ವೇಳೆಗೆ ಹೃದಯಾಘಾತದಿಂದ ಅವರು ಕೊನೆಯುಸಿರೆಳೆದಿದ್ದಾರೆ.

ಕಾರ್ತಿಕೇಯ ಘೋರ್ಪಡೆ ಅವರು ಸಂಡೂರು ಸಂಸ್ಥಾನದ ರಾಜ ಹಾಗೂ ಮಾಜಿ ಸಚಿವ ಎಂ.ವೈ. ಘೋರ್ಪಡೆ ಅವರ ಪುತ್ರರಾಗಿದ್ದು, ರಾಜಕೀಯ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದರು.

ಬಳ್ಳಾರಿ ಜಿಲ್ಲಾ ಬಿಜೆಪಿಯಲ್ಲಿ ಕಾರ್ತಿಕೇಯ ಘೋರ್ಪಡೆ ಅವರಿಗೆ ವಿಶೇಷ ಪ್ರಭಾವವಿದ್ದು, ಪಕ್ಷದ ಸಂಘಟನೆ ಹಾಗೂ ವಿವಿಧ ಚಟುವಟಿಕೆಗಳಲ್ಲಿ ಅವರು ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಸ್ಥಳೀಯ ರಾಜಕೀಯ ಬೆಳವಣಿಗೆಗಳಲ್ಲಿ ಅವರ ಪಾತ್ರ ಗಮನಾರ್ಹವಾಗಿತ್ತು.

ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ರಾಜಕೀಯ ನಾಯಕರು, ಬಿಜೆಪಿ ಕಾರ್ಯಕರ್ತರು ಹಾಗೂ ಅಪಾರ ಸಂಖ್ಯೆಯ ಅಭಿಮಾನಿಗಳು ಸಂತಾಪ ವ್ಯಕ್ತಪಡಿಸಿದ್ದಾರೆ. ಅವರ ಅಗಲಿಕೆಯಿಂದ ಬಳ್ಳಾರಿ ಜಿಲ್ಲೆಯ ರಾಜಕೀಯ ಮತ್ತು ಸಾಮಾಜಿಕ ವಲಯದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.

ಕುಟುಂಬದ ಮೂಲಗಳ ಪ್ರಕಾರ, ಕಾರ್ತಿಕೇಯ ಘೋರ್ಪಡೆ ಅವರ ಅಂತ್ಯಕ್ರಿಯೆ ಇಂದು ಸಂಜೆ ಸಂಡೂರಿನಲ್ಲಿ ನಡೆಯಲಿದೆ. ಅಂತಿಮ ದರ್ಶನಕ್ಕಾಗಿ ಬಂಧು-ಬಳಗ, ರಾಜಕೀಯ ಮುಖಂಡರು ಹಾಗೂ ಸಾರ್ವಜನಿಕರು ಆಗಮಿಸುವ ನಿರೀಕ್ಷೆಯಿದೆ.

ಬೆಂಗಳೂರು ಗಡಿಯಲ್ಲಿ ರಾಶಿ ರಾಶಿ ಜಿಲೆಟಿನ್ ಕಡ್ಡಿಗಳು ಪತ್ತೆ; ಸಾರ್ವಜನಿಕರಲ್ಲಿ ಭೀತಿ, ಭದ್ರತಾ ಇಲಾಖೆಗಳು ಅಲರ್ಟ್

ಬೆಂಗಳೂರು: ನಗರದ ಹೊರವಲಯದ ಅವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ನಿರ್ಜನ ಪ್ರದೇಶದಲ್ಲಿ ಭಾರಿ ಪ್ರಮಾಣದ ಜಿಲೆಟಿನ್ ಕಡ್ಡಿಗಳು ಹಾಗೂ ವೈಯರ್‌ಗಳು ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ.

ಮಾಹಿತಿ ತಿಳಿಯುತ್ತಿದ್ದಂತೆ ಅವಲಹಳ್ಳಿ ಪೊಲೀಸರು ಹಾಗೂ ವಿಧಿ ವಿಜ್ಞಾನ ಪ್ರಯೋಗಾಲಯದ (ಎಫ್‌ಎಸ್‌ಎಲ್) ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸ್ಫೋಟಕ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ನಿರ್ಜನ ಪ್ರದೇಶದಲ್ಲಿ ಅನುಮಾನಾಸ್ಪದವಾಗಿ ಬಿದ್ದಿದ್ದ ಜಿಲೆಟಿನ್ ಕಡ್ಡಿಗಳು ಮತ್ತು ವೈಯರ್‌ಗಳನ್ನು ಸ್ಥಳೀಯರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಧಾವಿಸಿದ ಅಧಿಕಾರಿಗಳು ಪ್ರದೇಶವನ್ನು ಭದ್ರತಾ ವಲಯವಾಗಿ ಘೋಷಿಸಿ ಪರಿಶೀಲನೆ ನಡೆಸಿದರು.

ಈ ಘಟನೆ ಕಳೆದ ತಿಂಗಳು ಪ್ರಧಾನಿ ನರೇಂದ್ರ ಮೋದಿ ಅವರ ಬೆಂಗಳೂರು ಭೇಟಿಯ ವೇಳೆ ಪತ್ತೆಯಾಗಿದ್ದ ಜಿಲೆಟಿನ್ ಕಡ್ಡಿಗಳ ಪ್ರಕರಣವನ್ನು ನೆನಪಿಸಿದೆ. ಕನಕಪುರ ರಸ್ತೆಯಲ್ಲಿರುವ ಆರ್ಟ್ ಆಫ್ ಲಿವಿಂಗ್ ಆಶ್ರಮದಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಿ ಆಗಮಿಸಿದ್ದ ಸಂದರ್ಭದಲ್ಲಿ, ಅವರ ಸಂಚಾರ ಮಾರ್ಗದ ಸಮೀಪದ ವಡೇರಹಳ್ಳಿ ಗೇಟ್ ಬಳಿ ಅನುಮಾನಾಸ್ಪದ ಬಾಕ್ಸ್ ಪತ್ತೆಯಾಗಿತ್ತು.

ಅಂದು ಬಾಂಬ್ ನಿಷ್ಕ್ರಿಯ ದಳ ಪರಿಶೀಲನೆ ನಡೆಸಿದಾಗ ಬಾಕ್ಸ್‌ನಲ್ಲಿ ಎರಡು ಜಿಲೆಟಿನ್ ಕಡ್ಡಿಗಳು, ನಾಲ್ಕು ಗಂಧದ ಕಡ್ಡಿಗಳು, ಒಂದು ಬೆಂಕಿಪೊಟ್ಟಣ ಹಾಗೂ ಎರಡು ಬ್ಯಾಟರಿಗಳು ಪತ್ತೆಯಾಗಿದ್ದವು. ಬಳಿಕ ಭದ್ರತಾ ದೃಷ್ಟಿಯಿಂದ ಸಂಪೂರ್ಣ ಮಾರ್ಗವನ್ನು ಮರುಪರಿಶೀಲನೆ ನಡೆಸಿ ಪ್ರಧಾನಿಗಳ ಸಂಚಾರಕ್ಕೆ ಅನುಮತಿ ನೀಡಲಾಗಿತ್ತು.

ಇದೀಗ ಮತ್ತೆ ಅವಲಹಳ್ಳಿ ವ್ಯಾಪ್ತಿಯಲ್ಲಿ ದೊಡ್ಡ ಪ್ರಮಾಣದಲ್ಲಿ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಈ ಸ್ಫೋಟಕ ವಸ್ತುಗಳನ್ನು ಕಲ್ಲು ಕ್ವಾರಿಗಳಲ್ಲಿ ಬಳಸಲು ತರಲಾಗಿರಬಹುದೆಂಬ ಶಂಕೆಯೂ ವ್ಯಕ್ತವಾಗಿದೆ.

ಪ್ರಕರಣ ದಾಖಲಿಸಿಕೊಂಡಿರುವ ಅವಲಹಳ್ಳಿ ಠಾಣೆ ಪೊಲೀಸರು ಜಿಲೆಟಿನ್ ಕಡ್ಡಿಗಳ ಮೂಲ, ಅವುಗಳನ್ನು ಅಲ್ಲಿ ಇರಿಸಿದವರು ಯಾರು ಹಾಗೂ ಅದರ ಉದ್ದೇಶವೇನು ಎಂಬುದರ ಕುರಿತು ತನಿಖೆ ಆರಂಭಿಸಿದ್ದಾರೆ. ಎಫ್‌ಎಸ್‌ಎಲ್ ವರದಿ ಬಂದ ಬಳಿಕ ಹೆಚ್ಚಿನ ಮಾಹಿತಿ ಲಭ್ಯವಾಗುವ ನಿರೀಕ್ಷೆಯಿದೆ.

ದೇವೇಗೌಡರ ಬಗ್ಗೆ ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುತ್ತಿದೆ: ಬಿ.ವೈ. ವಿಜಯೇಂದ್ರ ವಾಗ್ದಾಳಿ

ಬೆಂಗಳೂರು: ದೇವೇಗೌಡರ ಕುರಿತು ಕಾಂಗ್ರೆಸ್ ನಾಯಕರು ವ್ಯಕ್ತಪಡಿಸುತ್ತಿರುವ ಕಾಳಜಿ ಕೇವಲ ರಾಜಕೀಯ ಪ್ರೇರಿತವಾಗಿದ್ದು, ಅದು ಮೊಸಳೆ ಕಣ್ಣೀರಿನಂತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಟೀಕಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಅವರು, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಬಗ್ಗೆ ಕಾಂಗ್ರೆಸ್ ನಾಯಕರು ಮಾಡುತ್ತಿರುವ ಹೇಳಿಕೆಗಳಿಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

“ದೇಶದ ಅತ್ಯುನ್ನತ ಹುದ್ದೆಯಾದ ಪ್ರಧಾನ ಮಂತ್ರಿ ಸ್ಥಾನವನ್ನು ಅಲಂಕರಿಸಿದ್ದ ಹೆಮ್ಮೆಯ ಕನ್ನಡಿಗ ಎಚ್.ಡಿ. ದೇವೇಗೌಡರನ್ನು ಅಧಿಕಾರದಿಂದ ಕೆಳಗಿಳಿಸಿದ ಕುಖ್ಯಾತಿ ಕಾಂಗ್ರೆಸ್ ಪಕ್ಷಕ್ಕಿದೆ. ಆದರೆ ಈಗ ಅದೇ ಕಾಂಗ್ರೆಸ್ ನಾಯಕರು ದೇವೇಗೌಡರ ಬಗ್ಗೆ ಕೃತಕ ಕಾಳಜಿ ತೋರಿಸುತ್ತಿರುವುದು ಹಾಸ್ಯಾಸ್ಪದವಾಗಿದೆ” ಎಂದು ವಿಜಯೇಂದ್ರ ಆರೋಪಿಸಿದ್ದಾರೆ.

ರಾಜಕೀಯ ಜೀವನದುದ್ದಕ್ಕೂ ಕಾಂಗ್ರೆಸ್ ಪಕ್ಷ ದೇವೇಗೌಡರನ್ನು ಕಾಡಿದ್ದು, ಅವರ ಪಕ್ಷವನ್ನು ವಿಭಜಿಸಲು ಪ್ರಯತ್ನಿಸಿದೆ ಎಂದು ದೂರಿದ ಅವರು, ಇಂತಹ ಹಿನ್ನೆಲೆಯಿದ್ದರೂ ಕಾಂಗ್ರೆಸ್ ಇನ್ನೂ ಕೊಳಕು ರಾಜಕಾರಣವನ್ನು ಮುಂದುವರಿಸುತ್ತಿದೆ ಎಂದು ಟೀಕಿಸಿದ್ದಾರೆ.

ಭಾರತೀಯ ಜನತಾ ಪಕ್ಷವು ದೇವೇಗೌಡರನ್ನು ಸದಾ ಗೌರವದಿಂದ ನಡೆಸಿಕೊಂಡಿದೆ ಎಂದು ಹೇಳಿದ ವಿಜಯೇಂದ್ರ, ದೇಶದ ಅಭಿವೃದ್ಧಿ ಮತ್ತು ಸಮಗ್ರತೆಗಾಗಿ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದ ಮೇಲೆ ನಂಬಿಕೆ ಇಟ್ಟುಕೊಂಡು ದೇವೇಗೌಡರು ಜೆಡಿಎಸ್ ಪಕ್ಷವನ್ನು ಎನ್‌ಡಿಎ ಮೈತ್ರಿಕೂಟಕ್ಕೆ ಸೇರಿಸಿದ್ದಾರೆ ಎಂದು ತಿಳಿಸಿದ್ದಾರೆ.

“ದೇವೇಗೌಡರು ಬಿಜೆಪಿ ಹಾಗೂ ಎನ್‌ಡಿಎಗೆ ನೀಡಿರುವ ಬೆಂಬಲವನ್ನು ಸಹಿಸಿಕೊಳ್ಳಲಾಗದೇ ಕಾಂಗ್ರೆಸ್ ನಾಯಕರು ಅವರ ಹೆಸರನ್ನು ಬಳಸಿಕೊಂಡು ರಾಜಕೀಯ ಲಾಭ ಪಡೆಯಲು ಪ್ರಯತ್ನಿಸುತ್ತಿದ್ದಾರೆ. ಇದು ನಾಚಿಕೆಗೇಡಿತನದ ಪರಮಾವಧಿಯಾಗಿದೆ” ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

ಹಾರ್ಮುಜ್ ಜಲಸಂಧಿ ಸಮೀಪ ಅಮೆರಿಕದ ಅಪಾಚೆ ಹೆಲಿಕಾಪ್ಟರ್ ಪತನ!

ವಾಷಿಂಗ್ಟನ್: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಅಮೆರಿಕ ಸೇನೆಗೆ ಸೇರಿದ ಎಎಚ್-64 ಅಪಾಚೆ ಗನ್‌ಶಿಪ್ ಹೆಲಿಕಾಪ್ಟರ್ ಹಾರ್ಮುಜ್ ಜಲಸಂಧಿ ಸಮೀಪ ಪತನಗೊಂಡಿರುವ ಘಟನೆ ವರದಿಯಾಗಿದೆ. ಅದೃಷ್ಟವಶಾತ್ ಹೆಲಿಕಾಪ್ಟರ್‌ನಲ್ಲಿದ್ದ ಇಬ್ಬರು ಸಿಬ್ಬಂದಿಯನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ.

ಘಟನೆ ಕುರಿತು ಪ್ರತಿಕ್ರಿಯಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಹೆಲಿಕಾಪ್ಟರ್‌ನಲ್ಲಿದ್ದ ಇಬ್ಬರು ಸಿಬ್ಬಂದಿ ಸುರಕ್ಷಿತರಾಗಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿಸಿದ್ದಾರೆ.

ಹೆಲಿಕಾಪ್ಟರ್ ಪತನಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಇದು ತಾಂತ್ರಿಕ ದೋಷದಿಂದ ಸಂಭವಿಸಿದ ದುರಂತವೇ ಅಥವಾ ಹೊರಗಿನ ದಾಳಿಯ ಪರಿಣಾಮವೇ ಎಂಬುದರ ಕುರಿತು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ವಿಶೇಷವಾಗಿ ಇರಾನ್ ಮತ್ತು ಇಸ್ರೇಲ್ ನಡುವಿನ ಉದ್ವಿಗ್ನತೆ ಹೆಚ್ಚುತ್ತಿರುವ ಸಮಯದಲ್ಲೇ ಈ ಘಟನೆ ನಡೆದಿರುವುದರಿಂದ ಹಲವು ಪ್ರಶ್ನೆಗಳು ಮೂಡಿವೆ.

ಎಎಚ್-64 ಅಪಾಚೆ ಹೆಲಿಕಾಪ್ಟರ್ ಅಮೆರಿಕ ಸೇನೆಯ ಅತ್ಯಾಧುನಿಕ ಯುದ್ಧ ವಿಮಾನಗಳಲ್ಲಿ ಒಂದಾಗಿದ್ದು, ಹೆಲ್ಫೈರ್ ಕ್ಷಿಪಣಿಗಳು ಸೇರಿದಂತೆ ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಹೊತ್ತೊಯ್ಯುವ ಸಾಮರ್ಥ್ಯ ಹೊಂದಿದೆ. ವಿವಿಧ ಸೇನಾ ಕಾರ್ಯಾಚರಣೆಗಳಲ್ಲಿ ಅಪಾಚೆ ಹೆಲಿಕಾಪ್ಟರ್‌ಗಳು ಪ್ರಮುಖ ಪಾತ್ರ ವಹಿಸುತ್ತಿದ್ದು, ವಿಶ್ವದ ಅತ್ಯಂತ ಪರಿಣಾಮಕಾರಿ ದಾಳಿ ಹೆಲಿಕಾಪ್ಟರ್‌ಗಳಲ್ಲಿ ಒಂದಾಗಿ ಪರಿಗಣಿಸಲಾಗುತ್ತದೆ.

ಹಾರ್ಮುಜ್ ಜಲಸಂಧಿ ಪ್ರದೇಶವು ಜಾಗತಿಕ ಇಂಧನ ಸಾಗಣೆಯ ದೃಷ್ಟಿಯಿಂದ ಅತ್ಯಂತ ಮಹತ್ವದ್ದಾಗಿದ್ದು, ಈ ಪ್ರದೇಶದಲ್ಲಿ ಅಮೆರಿಕ ತನ್ನ ಭದ್ರತಾ ಕಾರ್ಯಾಚರಣೆಗಳನ್ನು ಬಲಪಡಿಸಿದೆ. ಇರಾನ್ ವಿರುದ್ಧದ ಕಾರ್ಯಾಚರಣೆಗಳಲ್ಲಿಯೂ ಅಪಾಚೆ ಹೆಲಿಕಾಪ್ಟರ್‌ಗಳನ್ನು ವ್ಯಾಪಕವಾಗಿ ಬಳಸಲಾಗುತ್ತಿದೆ.

ಪ್ರಸ್ತುತ ಘಟನೆ ಕುರಿತು ಅಮೆರಿಕ ಸೇನೆ ಮತ್ತು ಸಂಬಂಧಿತ ಭದ್ರತಾ ಸಂಸ್ಥೆಗಳು ತನಿಖೆ ನಡೆಸುತ್ತಿದ್ದು, ಪತನದ ನಿಜವಾದ ಕಾರಣ ಬಹಿರಂಗವಾಗುವವರೆಗೆ ಊಹಾಪೋಹಗಳಿಗೆ ಅವಕಾಶ ನೀಡದಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಬಂಡೀಪುರ ಅರಣ್ಯದಲ್ಲಿ ಎಣ್ಣೆ ಪಾರ್ಟಿ: ಮದ್ದೂರು ವಲಯದ ಆರ್‌ಎಫ್‌ಒ ಪುನೀತ್ ಕುಮಾರ್ ಅಮಾನತು

ಚಾಮರಾಜನಗರ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದೊಳಗೆ ನಡೆದ ಅಕ್ರಮ ಮದ್ಯಪಾನ ಪಾರ್ಟಿ ಪ್ರಕರಣದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಕಠಿಣ ಕ್ರಮ ಕೈಗೊಂಡಿದೆ. ಕರ್ತವ್ಯ ಲೋಪ ಮತ್ತು ಪ್ರಕರಣವನ್ನು ಮೇಲಧಿಕಾರಿಗಳಿಂದ ಮುಚ್ಚಿಟ್ಟಿರುವ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಮದ್ದೂರು ವನ್ಯಜೀವಿ ವಲಯದ ಆರ್‌ಎಫ್‌ಒ ಡಿ. ಪುನೀತ್ ಕುಮಾರ್ ಅವರನ್ನು ತಕ್ಷಣದಿಂದ ಅಮಾನತುಗೊಳಿಸಲಾಗಿದೆ.

ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಅರಣ್ಯದ ‘ಹುಲಿ ಕಟ್ಟೆ’ ಪ್ರದೇಶದಲ್ಲಿರುವ ಕಳ್ಳಬೇಟೆ ತಡೆ ಶಿಬಿರದ ಎದುರಲ್ಲೇ ರೌಡಿಶೀಟರ್ ಸತೀಶ್ ಅಲಿಯಾಸ್ ಮಹದೇವಪ್ರಸಾದ್ ಹಾಗೂ ಆತನ ಸಹಚರರು ಗಂಗಾಧರ್ ಮತ್ತು ಚೇತನ್ ಮದ್ಯಪಾನ ಪಾರ್ಟಿ ನಡೆಸಿದ್ದಾರೆ. ಶಿಬಿರದ ಸೌರ ಫಲಕವನ್ನು ಮೇಜಾಗಿ ಬಳಸಿಕೊಂಡು ಮದ್ಯದ ಬಾಟಲಿ, ಲೋಟ ಮತ್ತು ಆಹಾರ ಸಾಮಗ್ರಿಗಳೊಂದಿಗೆ ಮೋಜು ಮಾಡಿರುವುದು ಫೋಟೋಗಳಲ್ಲಿ ಸ್ಪಷ್ಟವಾಗಿದೆ. ಈ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದವು.

ತನಿಖೆಯಲ್ಲಿ ಆರ್‌ಎಫ್‌ಒ ಪುನೀತ್ ಕುಮಾರ್ ಅವರು ಘಟನೆ ಕುರಿತು ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡದೇ ಇರುವುದು ಹಾಗೂ ಆರೋಪಿಗಳ ವಿವರಗಳನ್ನು ದಾಖಲಿಸದೇ ಇರುವುದರಿಂದ ಕರ್ತವ್ಯ ಲೋಪ ಎಸಗಿರುವುದು ದೃಢಪಟ್ಟಿದೆ.

ಅರಣ್ಯ ಇಲಾಖೆ ಈಗ ಮೂವರು ಆರೋಪಿಗಳ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದು, ತಲೆಮರೆಸಿಕೊಂಡಿರುವ ಅವರನ್ನು ಪತ್ತೆ ಹಚ್ಚಲು ಪೊಲೀಸರು ಮತ್ತು ಅರಣ್ಯ ಇಲಾಖೆ ಜಂಟಿಯಾಗಿ ಶೋಧ ಕಾರ್ಯ ಮುಂದುವರೆಸಿದ್ದಾರೆ.

ಮತ್ತೆ ಚೇತರಿಸಿಕೊಂಡ ತುಂಗಭದ್ರಾ ಜಲಾಶಯ: ಮುಂಗಾರು ಆರಂಭದಲ್ಲೇ ಹೆಚ್ಚಿದ ಒಳಹರಿವು

0

ಬಳ್ಳಾರಿ: ಬೇಸಿಗೆಯ ತೀವ್ರತೆಯಿಂದಾಗಿ ನೀರಿನ ಮಟ್ಟ ಕುಸಿದು ಡೆಡ್ ಸ್ಟೋರೇಜ್ ಹಂತ ತಲುಪಿದ್ದ ತುಂಗಭದ್ರಾ ಜಲಾಶಯ ಇದೀಗ ಮುಂಗಾರು ಮಳೆಯ ಕೃಪೆಯಿಂದ ಮತ್ತೆ ಜೀವಂತವಾಗುತ್ತಿದೆ. ಜಲಾನಯನ ಪ್ರದೇಶಗಳಲ್ಲಿ ಸುರಿಯುತ್ತಿರುವ ಉತ್ತಮ ಮಳೆಯ ಪರಿಣಾಮ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದ್ದು, ಕೃಷಿ ಆಧಾರಿತ ಪ್ರದೇಶಗಳಲ್ಲಿ ಆಶಾಭಾವನೆ ಮೂಡಿಸಿದೆ.

ಗರಿಷ್ಠ 101 ಟಿಎಂಸಿ ನೀರು ಸಂಗ್ರಹಿಸುವ ಸಾಮರ್ಥ್ಯ ಹೊಂದಿರುವ ಜಲಾಶಯದಲ್ಲಿ ಸದ್ಯ 10 ಟಿಎಂಸಿ ನೀರು ಲಭ್ಯವಿದೆ. ಮಲೆನಾಡು ಪ್ರದೇಶಗಳಲ್ಲಿ ಮಳೆಯ ಪ್ರಮಾಣ ಇದೇ ರೀತಿ ಮುಂದುವರಿದರೆ ತುಂಗಭದ್ರಾ ಜಲಾಶಯ ಈ ವರ್ಷ ದಾಖಲೆಯ ವೇಗದಲ್ಲಿ ಭರ್ತಿಯಾಗುವ ಸಾಧ್ಯತೆ ಇದೆ.

ಕಳೆದ ವರ್ಷ ಮಳೆ ಕೊರತೆಯಿಂದಾಗಿ ರೈತರು ನೀರಿನ ಅಭಾವ ಎದುರಿಸಿದ್ದರೆ, ಈ ಬಾರಿ ಪರಿಸ್ಥಿತಿ ಸಂಪೂರ್ಣ ಬದಲಾಗುವ ಲಕ್ಷಣಗಳು ಗೋಚರಿಸುತ್ತಿವೆ. ತುಂಗಭದ್ರಾ ನೀರನ್ನು ಅವಲಂಬಿಸಿರುವ ಕಲ್ಯಾಣ ಕರ್ನಾಟಕ ಭಾಗದ ಕೊಪ್ಪಳ, ಬಳ್ಳಾರಿ, ರಾಯಚೂರು, ವಿಜಯನಗರ ಜಿಲ್ಲೆಗಳ ಜೊತೆಗೆ ಆಂಧ್ರಪ್ರದೇಶ ಮತ್ತು ತೆಲಂಗಾಣದ ವ್ಯಾಪಕ ಕೃಷಿ ಪ್ರದೇಶಗಳಿಗೆ ಇದು ಶುಭಸುದ್ದಿಯಾಗಿದೆ.

ಬಿತ್ತನೆ ಹಂಗಾಮಿನ ಆರಂಭದಲ್ಲೇ ಜಲಾಶಯದಲ್ಲಿ ನೀರಿನ ಪ್ರಮಾಣ ಹೆಚ್ಚುತ್ತಿರುವುದು ರೈತರ ಆತ್ಮವಿಶ್ವಾಸ ಹೆಚ್ಚಿಸಿದ್ದು, ಕೃಷಿ ಚಟುವಟಿಕೆಗಳಿಗೆ ಅಗತ್ಯ ನೀರಿನ ಭದ್ರತೆ ಸಿಗುವ ನಿರೀಕ್ಷೆ ಬಲಗೊಂಡಿದೆ.

error: Content is protected !!