Home Blog

ತುಳಸಿ ಗಿಡವನ್ನು ಮನೆಯಲ್ಲಿ ನೆಡುವ ಮುನ್ನ ಈ ನಿಯಮಗಳನ್ನು ತಿಳಿಯಲೇಬೇಕು!

ಹಿಂದೂ ಧರ್ಮ ಮತ್ತು ವಾಸ್ತು ಶಾಸ್ತ್ರದಲ್ಲಿ ತುಳಸಿ ಗಿಡವನ್ನು ಅತ್ಯಂತ ಪವಿತ್ರವಾದ ಗಿಡವಾಗಿ ಪರಿಗಣಿಸಲಾಗಿದೆ.

ತುಳಸಿ ಇರುವ ಮನೆಯಲ್ಲಿ ಶಾಂತಿ, ಸಕಾರಾತ್ಮಕ ಶಕ್ತಿ ಮತ್ತು ಸಮೃದ್ಧಿ ನೆಲೆಸುತ್ತದೆ ಎಂಬ ನಂಬಿಕೆ ಇದೆ.

ತುಳಸಿ ಗಿಡವನ್ನು ಶ್ರೀಹರಿ ವಿಷ್ಣು ಮತ್ತು ಲಕ್ಷ್ಮಿ ದೇವಿಗೆ ಅತ್ಯಂತ ಪ್ರಿಯವಾದುದಾಗಿ ಭಾವಿಸಲಾಗುತ್ತದೆ. ಆದ್ದರಿಂದ ಮನೆಯಲ್ಲಿನ ತುಳಸಿಯನ್ನು ನಿಯಮಿತವಾಗಿ ಪೂಜಿಸುವುದು ಧಾರ್ಮಿಕವಾಗಿ ಶುಭಕರ ಎಂದು ಹೇಳಲಾಗುತ್ತದೆ.

ವಾಸ್ತು ಶಾಸ್ತ್ರದ ಪ್ರಕಾರ ತುಳಸಿ ಗಿಡವನ್ನು ನೆಡುವ ದಿನಗಳಿಗೂ ಮಹತ್ವ ಇದೆ. ಗುರುವಾರ, ಶುಕ್ರವಾರ ಮತ್ತು ಶನಿವಾರಗಳನ್ನು ತುಳಸಿ ನೆಡಲು ಉತ್ತಮ ದಿನಗಳೆಂದು ಪರಿಗಣಿಸಲಾಗಿದೆ. ಕಾರ್ತಿಕ ಮಾಸ ಮತ್ತು ಏಕಾದಶಿಯ ದಿನಗಳಲ್ಲಿ ತುಳಸಿ ನೆಡುವುದು ವಿಶೇಷವಾಗಿ ಮಂಗಳಕರವೆಂದು ಹೇಳಲಾಗುತ್ತದೆ.

ಆದರೆ ಸೋಮವಾರದಂದು ಹೊಸ ತುಳಸಿ ಗಿಡವನ್ನು ನೆಡಬಾರದು ಎಂಬ ನಂಬಿಕೆ ಇದೆ.

ತುಳಸಿ ಗಿಡಕ್ಕೆ ಪ್ರತಿದಿನ ಬೆಳಿಗ್ಗೆ ನೀರು ಅರ್ಪಿಸುವುದು ಮತ್ತು ಸಂಜೆ ದೀಪ ಹಚ್ಚಿ ಪ್ರಾರ್ಥಿಸುವುದು ಶುಭಕರವೆಂದು ಹೇಳಲಾಗುತ್ತದೆ. ತುಳಸಿ ಸುತ್ತಮುತ್ತಲಿನ ಸ್ಥಳವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು ಮತ್ತು ಅಲ್ಲಿಗೆ ಚಪ್ಪಲಿ ಅಥವಾ ಕಸ ವಸ್ತುಗಳನ್ನು ಇಡಬಾರದು.

ಇದೇ ರೀತಿ, ಏಕಾದಶಿಯ ದಿನ ತುಳಸಿ ಎಲೆಗಳನ್ನು ಕೀಳಬಾರದು ಎಂದು ಧಾರ್ಮಿಕವಾಗಿ ಹೇಳಲಾಗುತ್ತದೆ. ತುಳಸಿ ಎಲೆಗಳನ್ನು ಶಿವಲಿಂಗಕ್ಕೆ ಅರ್ಪಿಸುವುದನ್ನು ತಪ್ಪಿಸಬೇಕು; ಆದರೆ ವಿಷ್ಣು ಮತ್ತು ಲಕ್ಷ್ಮಿ ದೇವಿಗೆ ಅರ್ಪಿಸುವುದು ಶ್ರೇಷ್ಠವೆಂದು ನಂಬಿಕೆ ಇದೆ.

ಒಟ್ಟಿನಲ್ಲಿ, ತುಳಸಿ ಗಿಡವನ್ನು ಭಕ್ತಿಯಿಂದ ಆರಾಧಿಸಿದರೆ ಮನೆಯಲ್ಲಿ ಶಾಂತಿ ಮತ್ತು ಸಕಾರಾತ್ಮಕ ವಾತಾವರಣ ಉಳಿಯುತ್ತದೆ ಎಂಬ ನಂಬಿಕೆ ಇದೆ.

ರಾಮಮಂದಿರದ ಬೆನ್ನಲ್ಲೇ ಬದರಿನಾಥದಲ್ಲೂ ದೇಣಿಗೆ ದುರುಪಯೋಗ? ತನಿಖೆಗೆ ಆದೇಶ

ಡೆಹ್ರಾಡೂನ್: ಅಯೋಧ್ಯೆಯ ರಾಮ ಮಂದಿರದ ದೇಣಿಗೆ ದುರುಪಯೋಗ ಪ್ರಕರಣದ ಬಳಿಕ ಇದೀಗ ಬದರಿನಾಥ ಧಾಮದಲ್ಲೂ ಕಾಣಿಕೆ ಹಣ ದುರುಪಯೋಗವಾಗಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ ತನಿಖೆಗೆ ಆದೇಶಿಸಲಾಗಿದೆ.

ಬದರಿನಾಥ–ಕೇದರನಾಥ ದೇವಸ್ಥಾನ ಸಮಿತಿ ಅಧ್ಯಕ್ಷ ಹೇಮಂತ್ ದ್ವಿವೇದಿ ಅವರು ಈ ಕುರಿತು ಮಾಹಿತಿ ನೀಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಆರೋಪಗಳನ್ನು ಸಮಿತಿ ಗಂಭೀರವಾಗಿ ಪರಿಗಣಿಸಿದೆ ಎಂದು ತಿಳಿಸಿದ್ದಾರೆ.

ಪ್ರಕರಣದ ಸತ್ಯಾಸತ್ಯತೆ ಪರಿಶೀಲಿಸಲು ವಿಶೇಷ ತನಿಖಾ ಸಮಿತಿಯನ್ನು ರಚಿಸಲು ಆದೇಶ ನೀಡಲಾಗಿದ್ದು, ಸಂಬಂಧಪಟ್ಟ ಸಿಬ್ಬಂದಿಗೆ ನೋಟಿಸ್ ಜಾರಿ ಮಾಡಿ ಸ್ಪಷ್ಟನೆ ನೀಡುವಂತೆ ಸೂಚಿಸಲಾಗಿದೆ.

ದೇಣಿಗೆ ದುರುಪಯೋಗದ ಆರೋಪದ ಹಿನ್ನೆಲೆ ಧಾರ್ಮಿಕ ಸಂಸ್ಥೆಗಳ ನಿರ್ವಹಣೆ ಹಾಗೂ ಹಣಕಾಸು ಪಾರದರ್ಶಕತೆ ಕುರಿತು ಮತ್ತೆ ಚರ್ಚೆ ಆರಂಭವಾಗಿದೆ.

ಕರ್ನಾಟಕದಲ್ಲಿ ಮುಂಗಾರು ಅಬ್ಬರ: ಕರಾವಳಿಗೆ ಆರೆಂಜ್ ಅಲರ್ಟ್, ಹಲವೆಡೆ ಯೆಲ್ಲೋ ಅಲರ್ಟ್!

ಬೆಂಗಳೂರು:- ಕರ್ನಾಟಕದಲ್ಲಿ ಮುಂಗಾರು ಮಳೆಯ ಅಬ್ಬರ ಜೋರಾಗಿದ್ದು, ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯ ಸಾಧ್ಯತೆ ಇದ್ದು, ಗಂಟೆಗೆ 30 ರಿಂದ 40 ಕಿಮೀ ವೇಗದಲ್ಲಿ ಗಾಳಿ ಬೀಸಬಹುದು. ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮೀನುಗಾರರು ಹಾಗೂ ಕರಾವಳಿ ನಿವಾಸಿಗಳಿಗೆ ಎಚ್ಚರಿಕೆ ನೀಡಲಾಗಿದೆ.

ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಸಹ ಭಾರಿ ಮಳೆಯ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ.

ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಸಹ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು ಸೇರಿದಂತೆ ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಮತ್ತು ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ.

ಮಳೆ ಮತ್ತು ಗಾಳಿಯ ಕಾರಣ ಜನರು ಮರಗಳು, ವಿದ್ಯುತ್ ಕಂಬಗಳು ಮತ್ತು ಹಳೆಯ ಕಟ್ಟಡಗಳಿಂದ ದೂರವಿರಲು ಹವಾಮಾನ ಇಲಾಖೆ ಸಲಹೆ ನೀಡಿದೆ.

ರಾಜರಾಜೇಶ್ವರಿ ನಗರದಲ್ಲಿ ಮರದ ಕೊಂಬೆ ಬಿದ್ದು ಅವಘಡ: 2 ಕಾರು, 1 ಬೈಕ್ ಜಖಂ!

ಬೆಂಗಳೂರು: ಮಳೆ ಅಥವಾ ಗಾಳಿ ಇಲ್ಲದಿದ್ದರೂ ಬೃಹತ್ ಮರದ ಕೊಂಬೆಯೊಂದು ಮುರಿದು ಬಿದ್ದ ಘಟನೆ ರಾಜರಾಜೇಶ್ವರಿ ನಗರದಲ್ಲಿ ನಡೆದಿದೆ.

ಘಟನೆಯಲ್ಲಿ ಎರಡು ಕಾರು ಮತ್ತು ಒಂದು ಬೈಕ್‌ ಜಖಂ ಆಗಿದೆ.

ಬಿ.ಎಂ.ಎಲ್. ಲೇಔಟ್‌ನಲ್ಲಿ ನಿನ್ನೆ ಮಧ್ಯಾಹ್ನ ಸುಮಾರು 3:30ಕ್ಕೆ ಈ ಘಟನೆ ನಡೆದಿದ್ದು, ಒಂದು ಕಾರು ಸಂಪೂರ್ಣವಾಗಿ ಜಖಂಗೊಂಡಿದೆ. ಇನ್ನೊಂದು ಕಾರು ಮತ್ತು ಬೈಕ್‌ಗೆ ಭಾಗಶಃ ಹಾನಿಯಾಗಿದೆ.

ಘಟನೆಯ ಸಮಯದಲ್ಲಿ ಅಲ್ಲಿ ಯಾರೂ ಇರದ ಕಾರಣ ದೊಡ್ಡ ಅನಾಹುತ ತಪ್ಪಿದೆ. ಹತ್ತಿರದಲ್ಲೇ ಶಾಲೆಗಳು ಇರುವುದರಿಂದ ಮಕ್ಕಳು ಇದ್ದಿದ್ದರೆ ಅಪಾಯ ಹೆಚ್ಚಾಗಿರುತ್ತಿತ್ತು.

ಸ್ಥಳೀಯರು ಹೇಳುವಂತೆ, ಅಪಾಯಕರ ಮರದ ಕೊಂಬೆಗಳನ್ನು ತೆರವುಗೊಳಿಸಲು ಹಲವಾರು ಬಾರಿ ಅಧಿಕಾರಿಗಳಿಗೆ ತಿಳಿಸಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಜಿಬಿಎ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ಇ-ಮೇಲ್ ಮೂಲಕ ISROಗೆ ಬಾಂಬ್ ಬೆದರಿಕೆ: ಯುಪಿ ಮೂಲದ ಆರೋಪಿ ಅರೆಸ್ಟ್‌!

ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಕೇಂದ್ರ ಕಚೇರಿಗೆ ಬಾಂಬ್ ಇಡುವುದಾಗಿ ಇ-ಮೇಲ್ ಮೂಲಕ ಬೆದರಿಕೆ ಹಾಕಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬೆದರಿಕೆ ಇ-ಮೇಲ್ ಹಿನ್ನೆಲೆ ಪ್ರಕರಣ ದಾಖಲಿಸಿಕೊಂಡಿದ್ದ ಸಂಜಯನಗರ ಪೊಲೀಸರು, ತಕ್ಷಣ ತನಿಖೆ ನಡೆಸಿ ಉತ್ತರ ಪ್ರದೇಶದ ಘಾಜಿಯಾಬಾದ್‌ನಲ್ಲಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಬಳಿಕ ಆತನನ್ನು ಬೆಂಗಳೂರಿಗೆ ಕರೆತಂದು ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ.

ಪೊಲೀಸರು ಆರೋಪಿಯ ಬಳಿಯಿದ್ದ ಎಲೆಕ್ಟ್ರಾನಿಕ್ ಸಾಧನಗಳನ್ನು ವಶಕ್ಕೆ ಪಡೆದಿದ್ದಾರೆ. ವಿಚಾರಣೆ ವೇಳೆ ಆತ ಮಾನಸಿಕ ಅಸ್ವಸ್ಥನೆಂದು ತಿಳಿದುಬಂದಿದ್ದು, ಇದರ ನಿಖರತೆ ಕುರಿತು ಪರಿಶೀಲನೆ ನಡೆಯುತ್ತಿದೆ.

ಘಟನೆಯ ಹಿನ್ನೆಲೆಯಲ್ಲಿ ಇಸ್ರೋ ಆಡಳಿತಾಧಿಕಾರಿ ನೀಡಿದ ದೂರು ಆಧರಿಸಿ ಪೊಲೀಸರು ಕ್ರಮ ಕೈಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬ್ರೇಕ್ ಫೇಲ್… ಮರಕ್ಕೆ ಬಸ್ ಡಿಕ್ಕಿ; 25ಕ್ಕೂ ಹೆಚ್ಚು ಮಂದಿಗೆ ಗಾಯ

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಬ್ರೇಕ್ ಫೇಲ್ ಆದ ಕೆಎಸ್‌ಆರ್‌ಟಿಸಿ ಬಸ್ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 25ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಶಿಗ್ಲಿ–ದೊಡ್ಡೂರ ಮಧ್ಯೆ ಶುಕ್ರವಾರ ಸಂಜೆ ನಡೆದಿದೆ.

ಲಕ್ಷ್ಮೇಶ್ವರ ಘಟಕಕ್ಕೆ ಸೇರಿದ ಬಸ್ ಶಿಗ್ಲಿ ಮಾರ್ಗವಾಗಿ ದೊಡ್ಡೂರ ಮೂಲಕ ಗುತ್ತಲ ಕಡೆಗೆ ತೆರಳುತ್ತಿತ್ತು. ದೊಡ್ಡೂರ ಗ್ರಾಮದ ಸಮೀಪ ಕಿರು ಸೇತುವೆ ನಿರ್ಮಾಣ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ವಾಹನ ಸಂಚಾರಕ್ಕಾಗಿ ನಿರ್ಮಿಸಿದ್ದ ತಾತ್ಕಾಲಿಕ ಕಚ್ಚಾ ರಸ್ತೆಯಲ್ಲಿ ಸಾಗುತ್ತಿದ್ದ ವೇಳೆ ಬಸ್‌ನ ಬ್ರೇಕ್ ಫೇಲ್ ಆಗಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಬಸ್‌ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ 105 ಮಂದಿಯಲ್ಲಿ 25ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿನಿಯರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಮರಕ್ಕೆ ಡಿಕ್ಕಿಯಾಗಿದ್ದರಿಂದ ಮತ್ತಷ್ಟು ದೊಡ್ಡ ಅನಾಹುತ ತಪ್ಪಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಗಾಯಾಳುಗಳಿಗೆ ಲಕ್ಷ್ಮೇಶ್ವರ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಗಂಭೀರವಾಗಿ ಗಾಯಗೊಂಡವರನ್ನು ಗದಗ ಜಿಮ್ಸ್ ಆಸ್ಪತ್ರೆಗೆ ರವಾನಿಸಲಾಯಿತು. ವಿದ್ಯಾರ್ಥಿಗಳ ಕೈ, ಕಾಲು, ಬೆನ್ನು ಹಾಗೂ ಕುತ್ತಿಗೆ ಭಾಗಗಳಿಗೆ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ನೋವಿನಿಂದ ನರಳುತ್ತಿರುವ ದೃಶ್ಯ ಮನಕಲಕುವಂತಿತ್ತು. ಕರ್ತವ್ಯ ಅವಧಿ ಮುಗಿದಿದ್ದರೂ ಆಸ್ಪತ್ರೆ ಸಿಬ್ಬಂದಿ, ವೈದ್ಯರು, ಪೊಲೀಸರು ಹಾಗೂ ಸಾರ್ವಜನಿಕರು ತುರ್ತು ಚಿಕಿತ್ಸೆಗೆ ನೆರವಾಗಿ ಮಾನವೀಯತೆ ಮೆರೆದರು.

ಈ ಭಾಗದಲ್ಲಿ ಸೇತುವೆ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿರುವುದರಿಂದ ಅಪಘಾತಗಳು ಮರುಕಳಿಸುತ್ತಿವೆ. ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಬೇಕು ಎಂದು ಸ್ಥಳೀಯರಾದ ಶರಣಪ್ಪ ಇಚ್ಚಂಗಿ ಹಾಗೂ ಗುಡ್ಡಪ್ಪ ಹಡಪದ ಆಗ್ರಹಿಸಿದರು.

ಗ್ರಾಮೀಣ ಭಾಗಗಳಲ್ಲಿ ಹಳೆಯ ಬಸ್‌ಗಳನ್ನು ಓಡಿಸಲಾಗುತ್ತಿದ್ದು, ಶಾಲಾ ಅವಧಿಯಲ್ಲಿ ಬಸ್‌ಗಳ ಕೊರತೆಯಿಂದ ವಿದ್ಯಾರ್ಥಿಗಳು ಕಿಕ್ಕಿರಿದು ಪ್ರಯಾಣಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ರಸ್ತೆ ದುರಸ್ತಿ ಹಾಗೂ ಹೆಚ್ಚುವರಿ ಬಸ್ ಸೇವೆ ಒದಗಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಅರ್ಹ ಮತದಾರರ ಹೆಸರು ಕೈ ತಪ್ಪದಂತೆ ಎಚ್ಚರಿಕೆ: ಭೀಮಾನಾಯಕ್

ವಿಜಯಸಾಕ್ಷಿ ಸುದ್ದಿ, ಹಗರಿಬೊಮ್ಮನಹಳ್ಳಿ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್-2026) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರ ಹೆಸರು ಕೈ ತಪ್ಪದಂತೆ ಕಾರ್ಯಕರ್ತರು ಎಚ್ಚರಿಕೆಯಿಂದ ಕೆಲಸ ನಿರ್ವಹಿಸಬೇಕು ಎಂದು ಮಾಜಿ ಶಾಸಕ ಭೀಮಾನಾಯಕ್ ಕರೆ ನೀಡಿದರು.

ಪಟ್ಟಣದ ಅಶೋಕ ಫಾರ್ಮ್ ಹೌಸ್‌ನಲ್ಲಿ ಆಯೋಜಿಸಿದ್ದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಮತದಾರರ ಪಟ್ಟಿ ಪರಿಷ್ಕರಣೆ ವಿಷಯ ದೇಶಾದ್ಯಂತ ಚರ್ಚೆಯಾಗುತ್ತಿದ್ದು, ಪ್ರತಿಯೊಬ್ಬರೂ ಇದರ ಬಗ್ಗೆ ಆಸಕ್ತಿ ವಹಿಸಬೇಕು ಎಂದು ಹೇಳಿದರು.

ತಮಿಳುನಾಡು ಮತ್ತು ಪಶ್ಚಿಮ ಬಂಗಾಳ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಸಾವಿರಾರು ಮತದಾರರ ಹೆಸರುಗಳು ಪಟ್ಟಿಯಿಂದ ಕೈ ತಪ್ಪಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದ ಅವರು, ದೇಶದ ಪ್ರತಿಯೊಬ್ಬ ಮತದಾರರು ಜಾಗೃತರಾಗಿರಬೇಕು ಎಂದರು. ವಿಶೇಷವಾಗಿ ಅಲ್ಪಸಂಖ್ಯಾತರು ಹಾಗೂ ಕೊಳಚೆ ಪ್ರದೇಶಗಳಲ್ಲಿ ವಾಸಿಸುವ ಜನರ ಮತಗಳ ಬಗ್ಗೆ ಹೆಚ್ಚಿನ ನಿಗಾ ವಹಿಸುವ ಅಗತ್ಯವಿದೆ ಎಂದು ತಿಳಿಸಿದರು.

ವಿಧಾನಸಭಾ ಕ್ಷೇತ್ರದಲ್ಲಿ ಬಿಎಲ್‌ಎ-1 ಹಾಗೂ ಬಿಎಲ್‌ಎ-2ಗಳನ್ನು ನೇಮಕ ಮಾಡಲಾಗಿದ್ದು, ಅವರಿಗೆ ಗುರುತಿನ ಚೀಟಿಗಳನ್ನು ವಿತರಿಸಲಾಗುವುದು. ಪ್ರತಿಯೊಂದು ಬೂತ್ ವ್ಯಾಪ್ತಿಯ ಕಾರ್ಯಕರ್ತರು ಗ್ರಾಮ ಮಟ್ಟದಲ್ಲಿ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಎಸ್‌ಐಆರ್ ಕುರಿತು ಟಂಟಂ ಮೂಲಕ ಜಾಗೃತಿ ಮೂಡಿಸಬೇಕು, ಗ್ರಾಮಗಳಲ್ಲಿ ಫ್ಲೆಕ್ಸ್ ಅಳವಡಿಸಬೇಕು ಹಾಗೂ ಮತದಾರರ ಪಟ್ಟಿಯ ಪ್ರತಿಯನ್ನು ಪಡೆದು ಸಂರಕ್ಷಿಸಿಕೊಳ್ಳಬೇಕು ಎಂದು ಸೂಚಿಸಿದರು.

ಚುನಾವಣೆಯ ವೇಳೆ ಮತದಾರರ ಹೆಸರು ಪಟ್ಟಿಯಲ್ಲಿ ಕಾಣಿಸದಿದ್ದರೆ, ಅದರ ವಿರುದ್ಧ ಕಾನೂನು ಹೋರಾಟ ನಡೆಸಲು ಈ ದಾಖಲೆಗಳು ಸಹಕಾರಿಯಾಗಲಿವೆ. ಆದ್ದರಿಂದ ಕೇವಲ ಕಾಂಗ್ರೆಸ್ ಪಕ್ಷದ ಮತದಾರರಷ್ಟೇ ಅಲ್ಲ, ಎಲ್ಲ ಪಕ್ಷಗಳ ಅರ್ಹ ಮತದಾರರ ಹೆಸರುಗಳು ಪಟ್ಟಿಯಿಂದ ಕೈ ತಪ್ಪದಂತೆ ಕಾರ್ಯಕರ್ತರು ಪಕ್ಷಾತೀತವಾಗಿ ಕೆಲಸ ಮಾಡಬೇಕು ಎಂದು ಭೀಮಾನಾಯಕ್ ಕರೆ ನೀಡಿದರು.

ಇದಕ್ಕೂ ಮುನ್ನ ಎಸ್‌ಐಆರ್ ಕುರಿತು ಡಿಜಿಟಲ್ ಪ್ರಾತ್ಯಕ್ಷಿಕೆಯನ್ನು ಪ್ರದರ್ಶಿಸಲಾಯಿತು. ಬಳಿಕ ಬಿಎಲ್‌ಎ ಕಾರ್ಯಕರ್ತರಿಗೆ ಗುರುತಿನ ಚೀಟಿಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕುರಿಶಿವಮೂರ್ತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೋರಿ ಗೋಣಿಬಸಪ್ಪ, ಅಕ್ಕಿ ತೋಟೇಶ, ಪತ್ರೇಶ್ ಹಿರೇಮಠ, ಲ್ಯಾಂಡ್ ಆರ್ಮಿ ದೇವೇಂದ್ರ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಡಾ. ಸಾಹಿರಾಬಾನು, ಉಪಾಧ್ಯಕ್ಷೆ ಯಶೋಧ ಮಂಜುನಾಥ, ಹಾಲ್ದಾಳ್ ವಿಜಯಕುಮಾರ್, ಗುಂಡ್ರ ಹನುಮಂತಪ್ಪ, ಎಂ. ಮರಿ ರಾಮಪ್ಪ, ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಗುರುಬಸವರಾಜ ಸೊನ್ನದ, ಜಿಲ್ಲಾ ಗ್ಯಾರಂಟಿ ಸಮಿತಿ ಉಪಾಧ್ಯಕ್ಷ ಜಂದಿಸಾಬ್ ಸೇರಿದಂತೆ ಕ್ಷೇತ್ರದ ವಿವಿಧ ಭಾಗಗಳಿಂದ ಆಗಮಿಸಿದ್ದ 500ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು.

“ಯಾವುದೇ ಅರ್ಹ ಮತದಾರರ ಹೆಸರು ಮತದಾರರ ಪಟ್ಟಿಯಿಂದ ಕೈ ತಪ್ಪದಂತೆ ಪಕ್ಷಾತೀತವಾಗಿ ನಿಗಾ ವಹಿಸಬೇಕು. ಮತದಾನದ ಹಕ್ಕು ರಕ್ಷಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ.”

— ಭೀಮಾನಾಯಕ್, ಮಾಜಿ ಶಾಸಕ

ಹಳ್ಳವನ್ನೇ ನುಂಗಿದ ಅಕ್ರಮ ಮರಳುಗಾರಿಕೆ..!

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ತಾಲೂಕಿನ ಬೂದಿಹಾಳ ಸೇರಿದಂತೆ ಕೆಲ ಸರ್ಕಾರಿ ಹಳ್ಳಗಳು ಹಾಗೂ ಪಟ್ಟಾ ಜಮೀನುಗಳಲ್ಲಿ ಯಾವುದೇ ಅಧಿಕೃತ ಪರವಾನಗಿ ಇಲ್ಲದೆ ಅಕ್ರಮ ಮರಳುಗಾರಿಕೆ ಅವ್ಯಾಹತವಾಗಿ ನಡೆಯುತ್ತಿದ್ದು, ಇದರಿಂದ ಜಾನುವಾರುಗಳಿಗೆ ನೀರಿನ ಆಸರೆಯಾಗಬೇಕಿದ್ದ ಹಳ್ಳಗಳು ಅಪಾಯದ ತಾಣಗಳಾಗಿ ಮಾರ್ಪಟ್ಟಿವೆ. ಈ ಕುರಿತು ಸಂಬಂಧಿಸಿದ ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೂದಿಹಾಳ ಹಳ್ಳದಲ್ಲಿ ಯಂತ್ರೋಪಕರಣಗಳ ಮೂಲಕ ಆಳವಾದ ಗುಂಡಿಗಳನ್ನು ತೋಡಿ ಮರಳು ಹೊರತೆಗೆಯಲಾಗುತ್ತಿದೆ. ಮಳೆಗಾಲದಲ್ಲಿ ಈ ಗುಂಡಿಗಳಲ್ಲಿ ನೀರು ತುಂಬಿದರೆ ಜನ-ಜಾನುವಾರುಗಳ ಜೀವಕ್ಕೆ ಅಪಾಯ ಉಂಟಾಗುವ ಸಾಧ್ಯತೆ ಇದೆ ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.

ಇದೇ ರೀತಿ ಪಟ್ಟಾ ಜಮೀನುಗಳಲ್ಲಿಯೂ ಯಾವುದೇ ಪರವಾನಗಿ ಪಡೆಯದೆ ಹಗಲು-ರಾತ್ರಿ ಮರಳು ತೆಗೆಯಲಾಗುತ್ತಿದ್ದು, ಮಣ್ಣು ಮಿಶ್ರಿತ ಮರಳನ್ನು ಹಳ್ಳದಲ್ಲೇ ಶುಚಿಗೊಳಿಸಿ ಸಾಗಾಟ ಮಾಡಲಾಗುತ್ತಿದೆ ಎನ್ನಲಾಗಿದೆ.

ಅಕ್ರಮ ಮರಳುಗಾರಿಕೆಯಿಂದ ಸರ್ಕಾರದ ಬೊಕ್ಕಸಕ್ಕೂ ಅಪಾರ ನಷ್ಟ ಉಂಟಾಗುತ್ತಿದ್ದರೂ ಅಧಿಕಾರಿಗಳು ಪರಿಣಾಮಕಾರಿ ಕ್ರಮ ಕೈಗೊಳ್ಳುತ್ತಿಲ್ಲ. ಸರ್ಕಾರಿ ಹಳ್ಳ ಮತ್ತು ಪಟ್ಟಾ ಜಮೀನುಗಳಲ್ಲಿ ಪರವಾನಗಿ ಇಲ್ಲದೆ ನಡೆಯುತ್ತಿರುವ ಗಣಿಗಾರಿಕೆಗೆ ಕಡಿವಾಣ ಹಾಕುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ತಹಸೀಲ್ದಾರ್ ಕೆ. ರಾಘವೇಂದ್ರ ರಾವ್, ಪರವಾನಗಿ ಇಲ್ಲದೆ ಅಕ್ರಮ ಮರಳು ಸಾಗಾಟ ನಡೆಸಿದವರ ವಿರುದ್ಧ ಈಗಾಗಲೇ ನಾಲ್ಕು ಪ್ರಕರಣಗಳನ್ನು ದಾಖಲಿಸಲಾಗಿದೆ. ಪ್ರಸ್ತುತ ಸರ್ಕಾರಿ ಹಳ್ಳ ಅಥವಾ ಪಟ್ಟಾ ಜಮೀನುಗಳಲ್ಲಿ ಮರಳು ಗಣಿಗಾರಿಕೆಗೆ ಯಾವುದೇ ಪರವಾನಗಿ ನೀಡಿಲ್ಲ. ಅಕ್ರಮ ಚಟುವಟಿಕೆ ಕಂಡುಬಂದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

“ಸರ್ಕಾರಿ ಹಳ್ಳ ಹಾಗೂ ಪಟ್ಟಾ ಜಮೀನುಗಳಲ್ಲಿ ಮರಳು ಗಣಿಗಾರಿಕೆಗೆ ಯಾವುದೇ ಪರವಾನಗಿ ನೀಡಿಲ್ಲ. ಅಕ್ರಮ ಚಟುವಟಿಕೆ ಕಂಡುಬಂದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು.”

– ಕೆ. ರಾಘವೇಂದ್ರ ರಾವ್, ತಹಸೀಲ್ದಾರ್

ಸರ್ಕಾರಿ ಸೇವೆಯಲ್ಲಿ ಮಾದರಿ ಕಾರ್ಯನಿರ್ವಹಣೆ: ಬಾದನಟ್ಟಿಯವರಿಗೆ ಆತ್ಮೀಯ ಸನ್ಮಾನ

ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲಾ ಖಜಾನೆ ಇಲಾಖೆಯಲ್ಲಿ ಸಹಾಯಕ ನಿರ್ದೇಶಕರಾಗಿ ಸೇವೆ ಸಲ್ಲಿಸಿ ವಯೋನಿವೃತ್ತಿ ಹೊಂದಿದ ಎಸ್.ಎಚ್. ಬಾದನಟ್ಟಿ ಅವರಿಗೆ ನಗರದ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾ ಖಜಾನೆ ಇಲಾಖೆ, ಜಿಲ್ಲಾ ಖಜಾನೆ ಇಲಾಖೆ ನೌಕರರ ಸಂಘ ಹಾಗೂ ಉಪಖಜಾನೆಗಳ ವತಿಯಿಂದ ಆತ್ಮೀಯ ಅಭಿನಂದನಾ ಹಾಗೂ ಬೀಳ್ಕೊಡುಗೆ ಸಮಾರಂಭ ನಡೆಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಸರ್ಕಾರಿ ನೌಕರರು ಸಾರ್ವಜನಿಕರ ಸಮಸ್ಯೆಗಳಿಗೆ ಸೌಜನ್ಯ ಹಾಗೂ ಸಹನೆಯಿಂದ ಸ್ಪಂದಿಸಬೇಕು. ಸರ್ಕಾರದ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಮಹತ್ತರ ಜವಾಬ್ದಾರಿ ಸರ್ಕಾರಿ ನೌಕರರ ಮೇಲಿದೆ. ಎಸ್.ಎಚ್. ಬಾದನಟ್ಟಿಯವರು ಶಾಂತ ಸ್ವಭಾವ, ಪ್ರಾಮಾಣಿಕತೆ ಹಾಗೂ ಜನಸ್ನೇಹಿ ಗುಣಗಳಿಂದ ಎಲ್ಲರಿಗೂ ಮಾದರಿಯಾಗಿದ್ದಾರೆ ಎಂದು ಹೇಳಿದರು.

ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್. ಮಾತನಾಡಿ, ಬಾದನಟ್ಟಿಯವರ ಸಮಯಪ್ರಜ್ಞೆ, ಕರ್ತವ್ಯನಿಷ್ಠೆ ಹಾಗೂ ಸಕಾರಾತ್ಮಕ ಮನೋಭಾವವನ್ನು ಶ್ಲಾಘಿಸಿ, ಅವರ ನಿವೃತ್ತಿ ಜೀವನ ಸುಖ-ಶಾಂತಿಯುತವಾಗಿರಲಿ ಎಂದು ಹಾರೈಸಿದರು.

ಜಿಲ್ಲಾಧಿಕಾರಿಗಳ ಕಾನೂನು ಸಲಹೆಗಾರ ಎಸ್.ಜಿ. ಪಲ್ಲೇದ ಮಾತನಾಡಿ, ಸರ್ಕಾರಿ ಸೇವೆಯಿಂದ ನಿವೃತ್ತರಾದರೂ ಸಮಾಜಸೇವೆಯ ಪ್ರವೃತ್ತಿ ಮುಂದುವರಿಯಬೇಕು. ಬಾದನಟ್ಟಿಯವರ ಪ್ರಾಮಾಣಿಕತೆ ಮತ್ತು ಕರ್ತವ್ಯತತ್ಪರತೆ ಸದಾ ಸ್ಮರಣೀಯವಾಗಿರುತ್ತದೆ ಎಂದರು.

ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ನಿಕಟಪೂರ್ವ ಜಿಲ್ಲಾಧ್ಯಕ್ಷ ಪ್ರೇಮನಾಥ ಗರಗ ಹಾಗೂ ಜಿಲ್ಲಾ ಖಜಾನೆ ಉಪನಿರ್ದೇಶಕ ವಿ. ಹರಿನಾಥ ಬಾಬು ಅವರು ಬಾದನಟ್ಟಿಯವರ ಸೇವಾ ಮನೋಭಾವ, ಸಮಯಪ್ರಜ್ಞೆ ಹಾಗೂ ಸಹೋದ್ಯೋಗಿಗಳಿಗೆ ನೀಡಿದ ಮಾರ್ಗದರ್ಶನವನ್ನು ಸ್ಮರಿಸಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಎಸ್.ಎಚ್. ಬಾದನಟ್ಟಿ ದಂಪತಿಯನ್ನು ಸನ್ಮಾನಿಸಿ ಗೌರವಿಸಿದರು.

ಕಾರ್ಯಕ್ರಮದಲ್ಲಿ ಬಸವರಾಜ ಕಡೆಮನಿ, ಕೆ.ಎ. ಸರ್ಫರಾಜ್ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಖಜಾನೆ, ಉಪಖಜಾನೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು. ಶ್ರೀಮತಿ ಯಲ್ಲಮ್ಮ ಲಮಾಣಿ ಪ್ರಾರ್ಥಿಸಿದರು. ಎಸ್.ಬಿ. ಹದ್ಲಿ ಸ್ವಾಗತಿಸಿದರು. ಉಮೇಶ ಅಸುಂಡಿ ನಿರೂಪಿಸಿದರು. ಉಳವೇಶ ಸಿದ್ದನ್ನವರ ವಂದಿಸಿದರು.

“ಸರ್ಕಾರಿ ಸೇವೆಯಲ್ಲಿ ಪ್ರಾಮಾಣಿಕತೆ, ಸಹನೆ ಮತ್ತು ಸಾರ್ವಜನಿಕರ ಬಗ್ಗೆ ಸ್ಪಂದಿಸುವ ಮನೋಭಾವವೇ ನೌಕರನ ನಿಜವಾದ ಆಸ್ತಿ. ಎಸ್.ಎಚ್. ಬಾದನಟ್ಟಿಯವರ ಸೇವೆ ಎಲ್ಲರಿಗೂ ಮಾದರಿಯಾಗಿದೆ.”

– ಸಿ.ಎನ್. ಶ್ರೀಧರ್, ಜಿಲ್ಲಾಧಿಕಾರಿ, ಗದಗ

ಮತದಾರರ ಜಾಗೃತಿಗೆ ಬೈಕ್ ರ‍್ಯಾಲಿ ಸದ್ದು

ವಿಜಯಸಾಕ್ಷಿ ಸುದ್ದಿ, ನರಗುಂದ: ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್-2026) ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ತಾಲೂಕು ಪಂಚಾಯಿತಿ, ತಾಲೂಕು ಆಡಳಿತ, ಪುರಸಭೆ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ತಾಲೂಕು ಸ್ವೀಪ್ ಸಮಿತಿ ವತಿಯಿಂದ ಶುಕ್ರವಾರ ನರಗುಂದ ನಗರದಲ್ಲಿ ಬೃಹತ್ ಬೈಕ್ ರ‍್ಯಾಲಿ ಹಾಗೂ ಮಾನವ ಸರಪಳಿ ಕಾರ್ಯಕ್ರಮ ನಡೆಯಿತು.

ನಗರದ ಉಡುಚಾ ಪರಮೇಶ್ವರಿ ದೇವಸ್ಥಾನದಿಂದ ಆರಂಭವಾದ ಬೈಕ್ ರ‍್ಯಾಲಿಯು ದಂಡಾಪೂರ ರಸ್ತೆ, ಮುಖ್ಯ ಮಾರುಕಟ್ಟೆ ರಸ್ತೆ, ಗಾಂಧಿ ಚೌಕ್ ಹಾಗೂ ಬಸವೇಶ್ವರ ಸರ್ಕಲ್ ಮೂಲಕ ಸಂಚರಿಸಿ, ವಿಜಯಪುರ–ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿಯ ಶಿವಾಜಿ ಸರ್ಕಲ್‌ನಲ್ಲಿ ಮಾನವ ಸರಪಳಿ ನಿರ್ಮಿಸುವ ಮೂಲಕ ಸಮಾರೋಪಗೊಂಡಿತು. ಈ ವೇಳೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ ಕುರಿತು ಜಾಗೃತಿ ಘೋಷಣೆಗಳನ್ನು ಕೂಗಿ ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಧರ್ ಚಿನಗುಂಡಿ, ಜೂನ್ 30ರಿಂದ ಜುಲೈ 29ರವರೆಗೆ ನಡೆಯುತ್ತಿರುವ ವಿಶೇಷ ಸಮಗ್ರ ಪರಿಷ್ಕರಣೆ ವೇಳೆ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಮನೆ-ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಸಾರ್ವಜನಿಕರು ಅಗತ್ಯ ದಾಖಲೆಗಳು ಹಾಗೂ ನಿಖರ ಮಾಹಿತಿಯನ್ನು ನೀಡಿ ಸಹಕರಿಸಬೇಕು. ಅಗತ್ಯ ನಮೂನೆಗಳನ್ನು ಭರ್ತಿ ಮಾಡಿ ಸ್ವೀಕೃತಿ ಪಡೆಯುವುದು ಕಡ್ಡಾಯ ಎಂದು ತಿಳಿಸಿದರು.

ಪುರಸಭೆ ಮುಖ್ಯಾಧಿಕಾರಿ ಸುಭಾಷ್ ಕುದಾನಪುರ ಮಾತನಾಡಿ, ಸ್ವೀಪ್ ಸಮಿತಿ ವತಿಯಿಂದ ಶಾಲಾ-ಕಾಲೇಜುಗಳು, ಗ್ರಾಮೀಣ ಪ್ರದೇಶಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ನಿರಂತರ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಅರ್ಹ ನಾಗರಿಕರೆಲ್ಲರೂ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳುವಂತೆ ವಿವಿಧ ಮಾಧ್ಯಮಗಳ ಮೂಲಕ ಅರಿವು ಮೂಡಿಸಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಗ್ರಾಮೀಣ ಉದ್ಯೋಗ ಸಹಾಯಕ ನಿರ್ದೇಶಕ ಸಂತೋಷಕುಮಾರ ಪಾಟೀಲ, ಪಂಚಾಯತ್ ರಾಜ್ ಸಹಾಯಕ ನಿರ್ದೇಶಕಿ ಕೃಷ್ಣಮ್ಮ ಹಾದಿಮನಿ, ಹಿರಿಯ ಆರೋಗ್ಯ ನಿರೀಕ್ಷಕ ಸಂಗಮೇಶ ಬ್ಯಾಳಿ, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಹಿರೇಮಠ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸ್ವೀಪ್ ಸಮಿತಿ ಸದಸ್ಯರು ಭಾಗವಹಿಸಿದ್ದರು.

“ನಿಖರ ಮತದಾರರ ಪಟ್ಟಿಯೇ ಪ್ರಜಾಪ್ರಭುತ್ವದ ಭದ್ರ ಅಡಿಪಾಯ. ಪ್ರತಿಯೊಬ್ಬ ಅರ್ಹ ನಾಗರಿಕರು ಬಿಎಲ್‌ಒಗಳಿಗೆ ಅಗತ್ಯ ಮಾಹಿತಿ ನೀಡಿ ಮತದಾರರ ಪಟ್ಟಿಯ ಪರಿಷ್ಕರಣೆಗೆ ಸಹಕರಿಸಬೇಕು.”

– ಶ್ರೀಧರ್ ಚಿನಗುಂಡಿ, ಕಾರ್ಯನಿರ್ವಾಹಕ ಅಧಿಕಾರಿ, ತಾಲೂಕು ಪಂಚಾಯಿತಿ ನರಗುಂದ