Home Blog

ಶಿವಮೊಗ್ಗದಲ್ಲಿ ಮಳೆ ಅಬ್ಬರ! ಸಾಗರ ತಾಲೂಕಿನ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಆಗಸ್ಟ್‌ 3ರ ಸೋಮವಾರ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳು, ಡಿಪ್ಲೊಮಾ ಮತ್ತು ಐಟಿಐ ಕಾಲೇಜುಗಳಿಗೆ ರಜೆ ನೀಡಲಾಗಿದೆ.

ಈ ಕುರಿತು ಸಾಗರ ತಾಲೂಕು ತಹಸೀಲ್ದಾರ್‌ ಡಾ. ಪ್ರತಿಭಾ ಅವರು ಆದೇಶ ಹೊರಡಿಸಿದ್ದಾರೆ. ನಿರಂತರ ಮಳೆಯಿಂದಾಗಿ ಕೆಲವೆಡೆ ರಸ್ತೆ ಸಂಪರ್ಕ, ಸಂಚಾರ ಹಾಗೂ ಜನಜೀವನದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ರಜೆ ಘೋಷಿಸಲಾಗಿದೆ.

ಮಲೆನಾಡು ಭಾಗದಲ್ಲಿ ಮಳೆಯ ತೀವ್ರತೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಪರಿಸ್ಥಿತಿಯನ್ನು ನಿರಂತರವಾಗಿ ಗಮನಿಸುತ್ತಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.

ಕರ್ನಾಟಕದಲ್ಲಿ 7 ದಿನ ಮಳೆ ಅಬ್ಬರ! 3 ಜಿಲ್ಲೆಗಳಿಗೆ ರೆಡ್ ಅಲರ್ಟ್, 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಮುಂದುವರಿಯಲಿದ್ದು, ಮುಂದಿನ 7 ದಿನಗಳ ಕಾಲ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ವಿವಿಧ ಭಾಗಗಳಲ್ಲಿ ಗುಡುಗು, ಸಿಡಿಲು ಹಾಗೂ ಬಿರುಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದರೆ, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಅತಿ ಭಾರೀ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ.

ಭಾರೀ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಇನ್ನು ಕರಾವಳಿಯ ಇತರ ಜಿಲ್ಲೆಗಳು ಸೇರಿದಂತೆ ಒಟ್ಟು 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ.

ಕರಾವಳಿ ಭಾಗದಲ್ಲಿ ಮಳೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯುವಾಗ ಹೆಚ್ಚಿನ ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ.

ಇನ್ನು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ.

ಉತ್ತರ ಕರ್ನಾಟಕದ ಜಿಲ್ಲೆಗಳಾದ ಬಾಗಲಕೋಟೆ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಧಾರವಾಡ ಹಾಗೂ ಹಾವೇರಿಯಲ್ಲೂ ಗಾಳಿಯೊಂದಿಗೆ ಹಗುರದಿಂದ ಮಧ್ಯಮ ಮಳೆಯಾಗುವ ಮುನ್ಸೂಚನೆ ಇದೆ.

ರಾಜ್ಯದ ಜನರು ಮಳೆ ಸಂದರ್ಭದಲ್ಲಿ ಎಚ್ಚರಿಕೆ ವಹಿಸುವಂತೆ ಹಾಗೂ ನದಿ, ಹಳ್ಳ-ಕೊಳ್ಳಗಳ ಬಳಿ ತೆರಳದಂತೆ ಅಧಿಕಾರಿಗಳು ಸೂಚಿಸಿದ್ದಾರೆ. ಮಲೆನಾಡು ಮತ್ತು ಕರಾವಳಿ ಭಾಗಗಳಲ್ಲಿ ಪರಿಸ್ಥಿತಿಯನ್ನು ಜಿಲ್ಲಾಡಳಿತಗಳು ನಿರಂತರವಾಗಿ ಗಮನಿಸುತ್ತಿವೆ.

ಪತ್ನಿ ಡಿವೋರ್ಸ್ ಕೇಳಿದ್ದಕ್ಕೆ ಆತ್ಮಹತ್ಯೆ? ಗುರುಗ್ರಾಮ್‌ನಲ್ಲಿ 36 ವರ್ಷದ ವ್ಯಕ್ತಿ ಸಾವು

0

ಚಂಡೀಗಢ: ಹರಿಯಾಣದ ಗುರುಗ್ರಾಮ್‌ನಲ್ಲಿ ಪತ್ನಿ ವಿಚ್ಛೇದನ ಕೇಳಿದ್ದರಿಂದ ಮಾನಸಿಕವಾಗಿ ನೊಂದಿದ್ದ ವ್ಯಕ್ತಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತನ ಪತ್ನಿಯನ್ನು ಪೊಲೀಸರು ವಿಚಾರಣೆಗಾಗಿ ವಶಕ್ಕೆ ಪಡೆದುಕೊಂಡಿದ್ದಾರೆ.

ಮೃತರನ್ನು 36 ವರ್ಷದ ಸಂಜೀವ್ ಯಾದವ್ ಎಂದು ಗುರುತಿಸಲಾಗಿದೆ. ಅವರು ಖಾಸಗಿ ಬಹುರಾಷ್ಟ್ರೀಯ ಕಂಪನಿಯೊಂದರಲ್ಲಿ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದರು. ಮೂಲತಃ ಅಮೃತಸರದವರಾದ ಸಂಜೀವ್, ಪತ್ನಿ ಮನ್‌ಪ್ರೀತ್ ಕೌರ್ ಹಾಗೂ ಏಳು ವರ್ಷದ ಮಗನೊಂದಿಗೆ ಗುರುಗ್ರಾಮ್‌ನ ಸೂರತ್ ನಗರ ಪ್ರದೇಶದಲ್ಲಿ ವಾಸವಾಗಿದ್ದರು.

ಘಟನೆ ನಡೆದ ವೇಳೆ ಮನೆಯಲ್ಲಿ ಸಂಜೀವ್, ಅವರ ಪತ್ನಿ ಮತ್ತು ಪುತ್ರ ಮಾತ್ರ ಇದ್ದರು. ಸಂಜೀವ್ ನೇಣು ಬಿಗಿದಿರುವುದು ಪತ್ನಿಗೆ ಸ್ವಲ್ಪ ಸಮಯದ ಬಳಿಕ ಗೊತ್ತಾಗಿದ್ದು, ತಕ್ಷಣವೇ ನೆರೆಹೊರೆಯವರ ನೆರವಿನಿಂದ ಮೃತದೇಹವನ್ನು ಕೆಳಗಿಳಿಸಲಾಗಿದೆ. ಬಳಿಕ ಕುಟುಂಬದವರಿಗೆ ಮಾಹಿತಿ ನೀಡಲಾಗಿದೆ.

ಈ ನಡುವೆ, ಮನೆಯಲ್ಲಿದ್ದ ಏಳು ವರ್ಷದ ಬಾಲಕ ತಂದೆಯನ್ನು ನೇಣು ಬಿಗಿದ ಸ್ಥಿತಿಯಲ್ಲಿ ಕಂಡು ಮೊಬೈಲ್‌ನಲ್ಲಿ ವಿಡಿಯೊ ಚಿತ್ರೀಕರಿಸಿದ್ದಾನೆ ಎಂದು ವರದಿಯಾಗಿದೆ.

ಮೃತನ ಸಹೋದರಿ ನೀಡಿರುವ ದೂರಿನ ಪ್ರಕಾರ, ಸಂಜೀವ್ ಮತ್ತು ಅವರ ಪತ್ನಿಯ ನಡುವೆ ಹಲವು ದಿನಗಳಿಂದ ಕುಟುಂಬ ಕಲಹ ನಡೆಯುತ್ತಿತ್ತು. ಪತ್ನಿ ವಿಚ್ಛೇದನ ಕೇಳಿದ್ದರಿಂದ ಸಂಜೀವ್ ಮಾನಸಿಕವಾಗಿ ನೊಂದಿದ್ದರು ಎಂದು ಆರೋಪಿಸಲಾಗಿದೆ. ಇದೇ ಕಾರಣದಿಂದ ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಕುಟುಂಬದ ದೂರಿನ ಆಧಾರದ ಮೇಲೆ ಪೊಲೀಸರು ಮನ್‌ಪ್ರೀತ್ ಕೌರ್ ಅವರನ್ನು ವಿಚಾರಣೆಗಾಗಿ ವಶಕ್ಕೆ ಪಡೆದುಕೊಂಡಿದ್ದು, ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಆತ್ಮಹತ್ಯೆಯ ನಿಖರ ಕಾರಣ ಹಾಗೂ ಘಟನೆಯ ಎಲ್ಲಾ ಆಯಾಮಗಳ ಕುರಿತು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಸದ್ಯ ಪ್ರಕರಣದ ಕುರಿತು ಯಾವುದೇ ಅಧಿಕೃತ ಅಂತಿಮ ತೀರ್ಮಾನ ಹೊರಬಿದ್ದಿಲ್ಲ.

ಟೀಂ ಇಂಡಿಯಾಗೆ ಬಿಗ್ ಶಾಕ್! ಶ್ರೀಲಂಕಾ ಟೆಸ್ಟ್ ಸರಣಿಯಿಂದ ಜಸ್ಪ್ರೀತ್ ಬುಮ್ರಾ ಔಟ್?

0

ಟೀಂ ಇಂಡಿಯಾದ ವೇಗಿ ಜಸ್ಪ್ರೀತ್ ಬುಮ್ರಾ ಅವರು ಮೊಣಕಾಲಿನ ಗಾಯದ ಕಾರಣ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯಿಂದ ಹೊರಗುಳಿಯಲಿದ್ದಾರೆ ಎನ್ನಲಾಗಿದೆ.

ಕಳೆದ ತಿಂಗಳು ಇಂಗ್ಲೆಂಡ್ ವಿರುದ್ಧ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಬುಮ್ರಾ ಮೊಣಕಾಲಿಗೆ ಗಾಯಗೊಂಡಿದ್ದರು. ಗಾಯದಿಂದ ಸಂಪೂರ್ಣವಾಗಿ ಚೇತರಿಸಿಕೊಳ್ಳಲು ಇನ್ನಷ್ಟು ಸಮಯ ಬೇಕಾಗಿರುವ ಹಿನ್ನೆಲೆಯಲ್ಲಿ, ಆಗಸ್ಟ್‌ 15ರಿಂದ ಗಾಲೆಯಲ್ಲಿ ಆರಂಭವಾಗಲಿರುವ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ಅವರು ಲಭ್ಯರಾಗುವುದಿಲ್ಲ ಎಂದು ಮೂಲಗಳು ತಿಳಿಸಿವೆ.

ಬುಮ್ರಾ ಅನುಪಸ್ಥಿತಿ ಭಾರತ ತಂಡಕ್ಕೆ ದೊಡ್ಡ ಹಿನ್ನಡೆಯಾಗುವ ಸಾಧ್ಯತೆ ಇದೆ. ಟೆಸ್ಟ್ ಕ್ರಿಕೆಟ್‌ನಲ್ಲಿ ತಂಡದ ಪ್ರಮುಖ ವೇಗದ ಬೌಲರ್ ಆಗಿರುವ ಅವರು, ವಿದೇಶಿ ಸರಣಿಗಳಲ್ಲಿ ಭಾರತಕ್ಕೆ ಹಲವು ಮಹತ್ವದ ಗೆಲುವುಗಳನ್ನು ತಂದುಕೊಟ್ಟಿದ್ದಾರೆ.

ಬಿಸಿಸಿಐ ವೈದ್ಯಕೀಯ ತಂಡ ಬುಮ್ರಾ ಅವರ ಫಿಟ್ನೆಸ್‌ ಮೇಲೆ ನಿರಂತರ ನಿಗಾ ಇಟ್ಟಿದ್ದು, ಸಂಪೂರ್ಣವಾಗಿ ಚೇತರಿಸಿಕೊಂಡ ಬಳಿಕವೇ ಅವರನ್ನು ಮತ್ತೆ ತಂಡಕ್ಕೆ ಸೇರಿಸುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಬುಮ್ರಾ ಬದಲಿಗೆ ಯಾರಿಗೆ ಅವಕಾಶ ಸಿಗಲಿದೆ ಎಂಬುದರ ಕುರಿತು ಶೀಘ್ರದಲ್ಲೇ ಬಿಸಿಸಿಐ ಅಧಿಕೃತ ಪ್ರಕಟಣೆ ಹೊರಡಿಸುವ ನಿರೀಕ್ಷೆಯಿದೆ.

ಕೊಪ್ಪಳದಲ್ಲಿ ನಿಗೂಢವಾಗಿ ಸಾಯುತ್ತಿವೆ ನೂರಾರು ಬೆಳ್ಳಕ್ಕಿಗಳು! ಹಕ್ಕಿ ಜ್ವರದ ಆತಂಕ

ಕೊಪ್ಪಳ: ಕೊಪ್ಪಳ ಜಿಲ್ಲೆಯಲ್ಲಿ ಬರಗಾಲದ ನಡುವೆಯೇ ಇದೀಗ ಹಕ್ಕಿಗಳ ಸರಣಿ ಸಾವು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.

ನಗರದ ಹೃದಯಭಾಗದಲ್ಲಿರುವ ನಗರಸಭೆ ಕಚೇರಿ ಹಿಂಭಾಗದ ಮರಗಳಲ್ಲಿ ಕಳೆದ ಕೆಲವು ದಿನಗಳಿಂದ ಬೆಳ್ಳಕ್ಕಿಗಳು ನಿಗೂಢವಾಗಿ ಸಾವನ್ನಪ್ಪುತ್ತಿದ್ದು, ಸ್ಥಳೀಯರಲ್ಲಿ ಹಕ್ಕಿ ಜ್ವರದ ಭೀತಿ ಹೆಚ್ಚಾಗಿದೆ.

ಕಳೆದ ಮೂರು ತಿಂಗಳಿಂದ ನಗರಸಭೆ ಹಿಂಭಾಗದ ಮರಗಳಲ್ಲಿ ಸಾವಿರಾರು ಬೆಳ್ಳಕ್ಕಿಗಳು ಗೂಡು ಕಟ್ಟಿಕೊಂಡು ವಾಸವಾಗಿದ್ದವು. ಆದರೆ ಕಳೆದ ಒಂದು ವಾರದಿಂದ ಪ್ರತಿದಿನ ಹತ್ತಾರು ಹಕ್ಕಿಗಳು ಸತ್ತು ಬೀಳುತ್ತಿರುವುದು ಕಂಡುಬಂದಿದೆ. ಇನ್ನೂ ನೂರಾರು ಹಕ್ಕಿಗಳು ಅಸ್ವಸ್ಥಗೊಂಡಿದ್ದು, ಹಾರಲು ಸಾಧ್ಯವಾಗದೆ ಮರಗಳ ಕೆಳಗೆ ಬೀಳುತ್ತಿರುವ ದೃಶ್ಯಗಳು ಕಂಡುಬರುತ್ತಿವೆ.

ಹಕ್ಕಿಗಳ ನಿರಂತರ ಸಾವಿನಿಂದ ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ. ಹಕ್ಕಿ ಜ್ವರ ಹರಡಿದೆಯೇ ಎಂಬ ಅನುಮಾನ ವ್ಯಕ್ತವಾಗಿದ್ದು, ಆರೋಗ್ಯ ಹಾಗೂ ಪಶುಸಂಗೋಪನಾ ಇಲಾಖೆಗಳು ತಕ್ಷಣ ಪರಿಶೀಲನೆ ನಡೆಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಸ್ಥಳೀಯರ ಆರೋಪದಂತೆ, ಘಟನೆ ನಡೆದಿರುವುದು ನಗರಸಭೆ ಕಚೇರಿ ಹಿಂಭಾಗದಲ್ಲೇ ಆದರೂ ಸಂಬಂಧಪಟ್ಟ ಅಧಿಕಾರಿಗಳು ಇನ್ನೂ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿಲ್ಲ. ಮೃತಪಟ್ಟ ಹಕ್ಕಿಗಳ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸುವ ಕ್ರಮವೂ ಕೈಗೊಳ್ಳಲಾಗಿಲ್ಲ ಎಂದು ಆರೋಪಿಸಲಾಗಿದೆ.

ಇದೇ ವೇಳೆ ಮಾಹಿತಿ ನೀಡಿದಾಗ ಕೆಲ ಅಧಿಕಾರಿಗಳು “ಎಸ್‌ಐಆರ್‌ ಕೆಲಸದಲ್ಲಿ ಬ್ಯುಸಿಯಾಗಿದ್ದೇವೆ” ಎಂದು ಪ್ರತಿಕ್ರಿಯಿಸಿದ್ದಾರೆ ಎನ್ನಲಾಗಿದ್ದು, ಇದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ.

ಕೊಪ್ಪಳ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೋಳಿ ಸಾಕಾಣಿಕೆ ಕೇಂದ್ರಗಳಿರುವ ಹಿನ್ನೆಲೆಯಲ್ಲಿ ಹಕ್ಕಿಗಳ ಸಾವಿನ ನಿಖರ ಕಾರಣವನ್ನು ತಕ್ಷಣ ಪತ್ತೆಹಚ್ಚಬೇಕು. ಅಗತ್ಯವಿದ್ದರೆ ಹಕ್ಕಿಗಳ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಿ, ಜನರಲ್ಲಿರುವ ಆತಂಕ ನಿವಾರಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಆಗಸ್ಟ್‌ 13 ಕರ್ನಾಟಕ ಬಂದ್ ಫಿಕ್ಸ್! ‘ವಾಪಸ್ ಪಡೆಯುವ ಪ್ರಶ್ನೆಯೇ ಇಲ್ಲ’- ವಾಟಾಳ್ ನಾಗರಾಜ್

ಮೈಸೂರು: ಆಗಸ್ಟ್‌ 13ರಂದು ಘೋಷಿಸಿರುವ ಕರ್ನಾಟಕ ಬಂದ್‌ ಅನ್ನು ಯಾವುದೇ ಕಾರಣಕ್ಕೂ ಹಿಂಪಡೆಯುವುದಿಲ್ಲ ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಸ್ಪಷ್ಟಪಡಿಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಗ್ರ ಕನ್ನಡಿಗರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ ಎಂದು ಹೇಳಿದರು.

ಕಾವೇರಿ ನೀರು ಹಂಚಿಕೆ ವಿಚಾರ ಮಾತ್ರವಲ್ಲದೆ, ರಾಜ್ಯದ ಗಡಿ ವಿವಾದ, ಯುವಕರಿಗೆ ಉದ್ಯೋಗ, ಮೈಸೂರಿನ ಸಮಗ್ರ ಅಭಿವೃದ್ಧಿ, ಬೆಳಗಾವಿಯಲ್ಲಿ ಎಂಇಎಸ್ ಚಟುವಟಿಕೆ ಸೇರಿದಂತೆ ಹಲವು ವಿಷಯಗಳನ್ನು ಮುಂದಿಟ್ಟುಕೊಂಡು ಬಂದ್‌ಗೆ ಕರೆ ನೀಡಲಾಗಿದೆ ಎಂದು ತಿಳಿಸಿದರು.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬಂದ್‌ ವಾಪಸ್ ಪಡೆಯುವಂತೆ ಮನವಿ ಮಾಡಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ವಾಟಾಳ್ ನಾಗರಾಜ್, “ಯಾವುದೇ ಕಾರಣಕ್ಕೂ ಬಂದ್‌ ಹಿಂಪಡೆಯುವುದಿಲ್ಲ. ಈಗಾಗಲೇ ದಿನಾಂಕ ನಿಗದಿಯಾಗಿದೆ. ಆಗಸ್ಟ್‌ 13ರಂದು ಅಖಂಡ ಕರ್ನಾಟಕ ಬಂದ್‌ ನಡೆಯಲಿದೆ” ಎಂದು ಸ್ಪಷ್ಟಪಡಿಸಿದರು.

ಆಗಸ್ಟ್‌ 13ರಂದು ನಡೆಯಲಿರುವ ಕರ್ನಾಟಕ ಬಂದ್‌ಗೆ ವಿವಿಧ ಕನ್ನಡಪರ ಸಂಘಟನೆಗಳು ಬೆಂಬಲ ಸೂಚಿಸುವ ಸಾಧ್ಯತೆ ಇದ್ದು, ಮುಂದಿನ ದಿನಗಳಲ್ಲಿ ಈ ಕುರಿತು ಮತ್ತಷ್ಟು ಚರ್ಚೆಗಳು ನಡೆಯುವ ನಿರೀಕ್ಷೆಯಿದೆ.

 

ತೈಪೆ ಓಪನ್ ಬ್ಯಾಡ್ಮಿಂಟನ್ʼನಲ್ಲಿ ಚಾಂಪಿಯನ್ ಪಟ್ಟಕ್ಕೇರಿದ 17ರ ತನ್ವಿ ಶರ್ಮಾ: ಇತಿಹಾಸ ಬರೆದ ಯುವ ಆಟಗಾರ್ತಿ

0

ಭಾರತದ ಉದಯೋನ್ಮುಖ ಬ್ಯಾಡ್ಮಿಂಟನ್ ತಾರೆ ತನ್ವಿ ಶರ್ಮಾ ತೈಪೆ ಓಪನ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಐತಿಹಾಸಿಕ ಸಾಧನೆ ಮಾಡಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದ್ದಾರೆ. ಕೇವಲ 17 ವರ್ಷ 222 ದಿನಗಳ ವಯಸ್ಸಿನ ತನ್ವಿ, ಫೈನಲ್‌ನಲ್ಲಿ ವಿಶ್ವದ 21ನೇ ಶ್ರೇಯಾಂಕಿತ ಆಟಗಾರ್ತಿ ನ್ಗುಯೆನ್ ಅವರನ್ನು 21-16, 21-16 ನೇರ ಸೆಟ್‌ಗಳಿಂದ ಸೋಲಿಸಿ ಚಾಂಪಿಯನ್ ಪಟ್ಟ ಅಲಂಕರಿಸಿದರು.

ಕೇವಲ 36 ನಿಮಿಷಗಳಲ್ಲೇ ಪಂದ್ಯವನ್ನು ಮುಗಿಸಿದ ತನ್ವಿ ಶರ್ಮಾ, ತೈಪೆ ಓಪನ್ ಇತಿಹಾಸದಲ್ಲೇ ಪ್ರಶಸ್ತಿ ಗೆದ್ದ ಅತ್ಯಂತ ಕಿರಿಯ ಆಟಗಾರ್ತಿ ಎಂಬ ಅಪೂರ್ವ ದಾಖಲೆಯನ್ನು ತಮ್ಮ ಹೆಸರಿಗೆ ಬರೆಯಿಸಿಕೊಂಡಿದ್ದಾರೆ. ಈ ಮೂಲಕ ತೈವಾನ್‌ನ ಮಾಜಿ ತಾರೆ ತೈ ತ್ಸು ಯಿಂಗ್ ಅವರ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿದು ಹೊಸ ಮೈಲಿಗಲ್ಲು ನಿರ್ಮಿಸಿದ್ದಾರೆ.

ಇದರೊಂದಿಗೆ, 2008ರಲ್ಲಿ ಸೈನಾ ನೆಹ್ವಾಲ್ ಬಳಿಕ ತೈಪೆ ಓಪನ್ ಮಹಿಳಾ ಸಿಂಗಲ್ಸ್ ಪ್ರಶಸ್ತಿ ಗೆದ್ದ ಎರಡನೇ ಭಾರತೀಯ ಆಟಗಾರ್ತಿ ಎಂಬ ಗೌರವವೂ ತನ್ವಿ ಶರ್ಮಾ ಅವರ ಪಾಲಾಗಿದೆ. ಈ ಸಾಧನೆ ಭಾರತೀಯ ಬ್ಯಾಡ್ಮಿಂಟನ್‌ಗೆ ಮತ್ತೊಂದು ಸುವರ್ಣ ಅಧ್ಯಾಯವನ್ನು ಸೇರಿಸಿದೆ.

ಐತಿಹಾಸಿಕ ಗೆಲುವಿನ ಬಳಿಕ ಪ್ರತಿಕ್ರಿಯಿಸಿದ ತನ್ವಿ, “ಈ ಪ್ರಶಸ್ತಿ ಗೆದ್ದಿರುವುದು ನನಗೆ ಅಪಾರ ಸಂತೋಷ ತಂದಿದೆ. ಟೂರ್ನಿಯ ಆರಂಭದಲ್ಲಿ ನಾನು ಚಾಂಪಿಯನ್ ಆಗುತ್ತೇನೆ ಎಂದು ನಿರೀಕ್ಷಿಸಿರಲಿಲ್ಲ. ಆದರೆ ಪ್ರತಿಯೊಂದು ಪಂದ್ಯದಲ್ಲೂ ನನ್ನ ಶೇ.100ರಷ್ಟು ಪ್ರದರ್ಶನ ನೀಡುವ ಗುರಿಯೊಂದಿಗೆ ಆಡಿದೆ. ಪಂದ್ಯದಿಂದ ಪಂದ್ಯಕ್ಕೆ ಆತ್ಮವಿಶ್ವಾಸ ಹೆಚ್ಚಿಸಿಕೊಂಡು ಈ ಸಾಧನೆ ಸಾಧ್ಯವಾಯಿತು” ಎಂದು ಹೇಳಿದ್ದಾರೆ.

ಗುವಾಹಟಿಯ ನ್ಯಾಷನಲ್ ಸೆಂಟರ್ ಆಫ್ ಎಕ್ಸಲೆನ್ಸ್‌ನಲ್ಲಿ ದಕ್ಷಿಣ ಕೊರಿಯಾದ ಖ್ಯಾತ ಕೋಚ್ ಪಾರ್ಕ್ ಟೇ-ಸಾಂಗ್ ಅವರ ಮಾರ್ಗದರ್ಶನದಲ್ಲಿ ತರಬೇತಿ ಪಡೆಯುತ್ತಿರುವ ತನ್ವಿ, ಇಡೀ ಟೂರ್ನಿಯುದ್ದಕ್ಕೂ ಕೇವಲ ಒಂದು ಗೇಮ್ ಮಾತ್ರ ಸೋತು ಅಮೋಘ ಪ್ರದರ್ಶನ ನೀಡಿದ್ದಾರೆ. ಪ್ರಶಸ್ತಿ ಗೆದ್ದ ಬಳಿಕ ತಮಗೆ ಲಭಿಸಿದ ಚಿನ್ನದ ಪದಕವನ್ನು ತಮ್ಮ ಕೋಚ್ ಪಾರ್ಕ್ ಟೇ-ಸಾಂಗ್ ಅವರ ಕೊರಳಿಗೆ ಹಾಕಿ ಗೌರವ ಸಲ್ಲಿಸಿದ್ದು ಅಭಿಮಾನಿಗಳ ಮನಗೆದ್ದ ಕ್ಷಣವಾಗಿ ಪರಿಣಮಿಸಿತು.

ಆಗಸ್ಟ್ 9ರಿಂದ ಮೂರು ದಿನಗಳ ಕಾಲ ಜೆಡಿಎಸ್ ಪಾದಯಾತ್ರೆ ನಡೆಯಲಿದೆ: ನಿಖಿಲ್ ಕುಮಾರಸ್ವಾಮಿ

ರಾಮನಗರ: ಬಿಡದಿ ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್ ವತಿಯಿಂದ ಆಗಸ್ಟ್ 9, 10 ಮತ್ತು 11 ರಂದು ಬೈರಮಂಗಲದಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ವರೆಗೆ 38 ಕಿಲೋಮೀಟರ್ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ.

ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರ ಹಿತಾಸಕ್ತಿ ಕಾಪಾಡುವ ಉದ್ದೇಶದಿಂದ ಈ ಪಾದಯಾತ್ರೆ ಆಯೋಜಿಸಲಾಗಿದ್ದು, ಬೈರಮಂಗಲದಿಂದ ಫ್ರೀಡಂ ಪಾರ್ಕ್‌ವರೆಗೆ ರೈತರೊಂದಿಗೆ ಹೆಜ್ಜೆ ಹಾಕುವ ಮೂಲಕ ರಾಜ್ಯ ಸರ್ಕಾರದ ಗಮನ ಸೆಳೆಯಲು ಪ್ರಯತ್ನಿಸಲಾಗುತ್ತಿದೆ ಎಂದು ಹೇಳಿದರು.

ಬಿಡದಿ ಟೌನ್‌ಶಿಪ್ ಯೋಜನೆಯನ್ನು ರೈತರು ಸಂಪೂರ್ಣವಾಗಿ ವಿರೋಧಿಸುತ್ತಿದ್ದರೂ ಸರ್ಕಾರ ಅವರ ಧ್ವನಿಗೆ ಸ್ಪಂದಿಸುತ್ತಿಲ್ಲ. ರೈತರ ಪರವಾಗಿ ನಿಲ್ಲುವುದು ಜೆಡಿಎಸ್‌ನ ಜವಾಬ್ದಾರಿಯಾಗಿದ್ದು, ಈ ಹಿನ್ನೆಲೆಯಲ್ಲಿ ಪಾದಯಾತ್ರೆ ನಡೆಸಲಾಗುತ್ತಿದೆ ಎಂದು ನಿಖಿಲ್ ಕುಮಾರಸ್ವಾಮಿ ತಿಳಿಸಿದರು.

ಈ ಹಿಂದೆ ಜುಲೈ 30, 31 ಮತ್ತು ಆಗಸ್ಟ್ 1 ರಂದು ಪಾದಯಾತ್ರೆ ಆಯೋಜಿಸಲಾಗಿತ್ತು. ಆದರೆ ಅಜ್ಜಿ ಚೆನ್ನಮ್ಮ ಅವರ ನಿಧನದ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ಮುಂದೂಡಲಾಗಿತ್ತು. ಇದೀಗ ಆಗಸ್ಟ್ 9ರಿಂದ 11ರವರೆಗೆ ಮೂರು ದಿನಗಳ ಕಾಲ ಪಾದಯಾತ್ರೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.

ಪಾದಯಾತ್ರೆಯಲ್ಲಿ ರಾಮನಗರ ಜಿಲ್ಲೆಯ ಐದು ತಾಲ್ಲೂಕುಗಳ ರೈತರು, ಜೆಡಿಎಸ್ ಕಾರ್ಯಕರ್ತರು ಹಾಗೂ ಮುಖಂಡರು ಭಾಗವಹಿಸಲಿದ್ದಾರೆ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಪಕ್ಷದ ಹಾಲಿ ಹಾಗೂ ಮಾಜಿ ಶಾಸಕರು ಸಹ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ನಿಖಿಲ್ ಕುಮಾರಸ್ವಾಮಿ ಮಾಹಿತಿ ನೀಡಿದರು.

ಪ್ರತಿಭಟನೆ ಪ್ರಜಾಪ್ರಭುತ್ವದ ಹಕ್ಕು, ಆದರೆ ಹಿಂಸಾಚಾರಕ್ಕೆ ಅವಕಾಶವಿಲ್ಲ: ಸ್ಮೃತಿ ಇರಾನಿ

0

ನವದೆಹಲಿ: ನೀಟ್ (NEET) ಪರೀಕ್ಷೆ ಅಕ್ರಮವನ್ನು ಖಂಡಿಸಿ ದೇಶದ ವಿವಿಧ ಭಾಗಗಳಲ್ಲಿ ನಡೆದ ಪ್ರತಿಭಟನೆಗಳು ಯುವಜನತೆ ಮತ್ತು ಕೇಂದ್ರ ಸರ್ಕಾರದ ನಡುವಿನ ಅಂತರವನ್ನು ಪ್ರತಿಬಿಂಬಿಸುತ್ತವೆ ಎಂಬ ವಾದಗಳನ್ನು ಬಿಜೆಪಿ ಹಿರಿಯ ನಾಯಕಿ ಹಾಗೂ ಮಾಜಿ ಕೇಂದ್ರ ಶಿಕ್ಷಣ ಸಚಿವೆ ಸ್ಮೃತಿ ಇರಾನಿ ತಳ್ಳಿಹಾಕಿದ್ದಾರೆ.

ವಿಶೇಷ ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳನ್ನು ತಡೆಗಟ್ಟಲು ಕೇಂದ್ರ ಸರ್ಕಾರ ತ್ವರಿತ ಹಾಗೂ ಕಾನೂನಾತ್ಮಕ ಕ್ರಮಗಳನ್ನು ಕೈಗೊಂಡಿದ್ದು, ಪರೀಕ್ಷಾ ವ್ಯವಸ್ಥೆಯನ್ನು ಮತ್ತಷ್ಟು ಪಾರದರ್ಶಕಗೊಳಿಸಲು ಸುಧಾರಣಾ ಕ್ರಮಗಳನ್ನು ಜಾರಿಗೊಳಿಸಲಾಗಿದೆ ಎಂದು ಹೇಳಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರದ ವಿರುದ್ಧ ಭಿನ್ನಾಭಿಪ್ರಾಯ ವ್ಯಕ್ತಪಡಿಸುವುದು, ಪ್ರತಿಭಟನೆ ನಡೆಸುವುದು ಮತ್ತು ಚರ್ಚೆ ನಡೆಸುವುದು ಪ್ರತಿಯೊಬ್ಬರ ಸಾಂವಿಧಾನಿಕ ಹಕ್ಕಾಗಿದೆ. ಆದರೆ, ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಮಾಡುವುದು ಅಥವಾ ಹಿಂಸಾಚಾರ ಮತ್ತು ಅರಾಜಕತೆ ಸೃಷ್ಟಿಸುವುದನ್ನು ಯಾವುದೇ ಕಾರಣಕ್ಕೂ ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಸ್ಮೃತಿ ಇರಾನಿ ಸ್ಪಷ್ಟಪಡಿಸಿದರು.

ದೆಹಲಿ ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆ ವೇಳೆ ದೆಹಲಿ ಪೊಲೀಸ್ ಸಿಬ್ಬಂದಿ ಹಾಗೂ ಅರೆಸೈನಿಕ ಪಡೆಗಳ ಕೆಲ ಸಿಬ್ಬಂದಿಗೆ ಗಾಯಗಳಾಗಿರುವ ಘಟನೆಗೆ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಭದ್ರತಾ ಸಿಬ್ಬಂದಿಯ ಮೇಲಿನ ಹಲ್ಲೆ ಖಂಡನೀಯವಾಗಿದ್ದು, ಕಾನೂನು ಸುವ್ಯವಸ್ಥೆ ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದು ಹೇಳಿದರು.

ಪ್ರತಿಭಟನೆಯ ನೆಪದಲ್ಲಿ ಸಮಾಜಘಾತಕ ಹಾಗೂ ಕ್ರಿಮಿನಲ್ ಹಿನ್ನೆಲೆಯುಳ್ಳ ಕೆಲ ಶಕ್ತಿಗಳು ಒಳನುಸುಳಿರುವ ಸಾಧ್ಯತೆಗಳಿವೆ. ಆದ್ದರಿಂದ ಸಂಪೂರ್ಣ ತನಿಖೆ ಪೂರ್ಣಗೊಳ್ಳುವ ಮೊದಲು ಯಾವುದೇ ತೀರ್ಮಾನಕ್ಕೆ ಬರುವುದು ಸರಿಯಲ್ಲ ಎಂದು ಅವರು ಅಭಿಪ್ರಾಯಪಟ್ಟರು.

ಕುರ್ಕುರೆ ಪ್ಯಾಕೆಟ್ʼನಲ್ಲಿದ್ದ ಗಿಫ್ಟ್ ಬಾಲ್ ನುಂಗಿ 5 ವರ್ಷದ ಬಾಲಕ ದಾರುಣ ಸಾವು!

ಮೈಸೂರು: ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಗೌರಿಪುರ ಗ್ರಾಮದಲ್ಲಿ ಕುರ್ಕುರೆ ಪ್ಯಾಕೆಟ್‌ನಲ್ಲಿದ್ದ ಗಿಫ್ಟ್ ಬಾಲ್ ಅನ್ನು ಬಾಯಿಗೆ ಹಾಕಿ ನುಂಗಿದ ಪರಿಣಾಮ ಐದು ವರ್ಷದ ಬಾಲಕ ಉಸಿರುಗಟ್ಟಿ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ನಡೆದಿದೆ.

ಮೃತ ಬಾಲಕನನ್ನು ಮುಕುಂದ್ ಮಯೂರ್ (5) ಎಂದು ಗುರುತಿಸಲಾಗಿದೆ. ಆತ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷೆ ಗೌರಮ್ಮ ಹಾಗೂ ಶಂಕರ್ ನಾಯಕ ಅವರ ಮೊಮ್ಮಗ ಹಾಗೂ ಸಂತೋಷ್–ಐಶ್ವರ್ಯ ದಂಪತಿಯ ಏಕೈಕ ಪುತ್ರನಾಗಿದ್ದ.

ಬಾಲಕ ಕುರ್ಕುರೆ ಪ್ಯಾಕೆಟ್ ಖರೀದಿಸಿದ್ದನು. ಪ್ಯಾಕೆಟ್‌ನೊಳಗೆ ಉಡುಗೊರೆಯಾಗಿ ನೀಡಲಾಗಿದ್ದ ಸಣ್ಣ ಪ್ಲಾಸ್ಟಿಕ್ ಗಿಫ್ಟ್ ಬಾಲ್ ಅನ್ನು ಕುರ್ಕುರೆ ಎಂದು ಭಾವಿಸಿ ಬಾಯಿಗೆ ಹಾಕಿದ್ದಾನೆ. ಅಕಸ್ಮಿಕವಾಗಿ ಅದನ್ನು ನುಂಗಿದ ಪರಿಣಾಮ ಬಾಲ್ ಗಂಟಲಲ್ಲಿ ಸಿಲುಕಿ ಉಸಿರಾಟಕ್ಕೆ ತೊಂದರೆಯಾಗಿದ್ದು, ಬಾಲಕ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

ಘಟನೆಯಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಇಡೀ ಗ್ರಾಮವೇ ಶೋಕಸಾಗರದಲ್ಲಿ ಮುಳುಗಿದೆ. ಈ ಸಂಬಂಧ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಘಟನೆ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ.