Home Blog

ನೈಸ್ ಅಕ್ರಮ ನಿವೇಶನ ಹಂಚಿಕೆ ಆರೋಪ! ಸಿಎಂ ಡಿ.ಕೆ.ಶಿವಕುಮಾರ್ʼಗೆ ದೇವೇಗೌಡರ ಸುದೀರ್ಘ ಪತ್ರ

0

ಬೆಂಗಳೂರು: ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಎಂಟರ್‌ಪ್ರೈಸಸ್ ಲಿಮಿಟೆಡ್ (NICEL) ನೈಸ್ ಸಂಸ್ಥೆಗೆ ಸಂಬಂಧಿಸಿದಂತೆ ರಾಜ್ಯ ಸಚಿವ ಸಂಪುಟ ತೆಗೆದುಕೊಂಡಿರುವ ನಿರ್ಧಾರವನ್ನು ವಿರೋಧಿಸಿ ಮಾಜಿ ಪ್ರಧಾನಮಂತ್ರಿ ಎಚ್‌.ಡಿ. ದೇವೇಗೌಡರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಹಿರಂಗ ಪತ್ರ ಬರೆದಿದ್ದಾರೆ.

ಸೆಪ್ಟೆಂಬರ್ 4ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಜಮೀನು ಕಳೆದುಕೊಂಡವರಿಗೆ 1,453 ನಿವೇಶನಗಳನ್ನು ಹಂಚಿಕೆ ಮಾಡಲು ನೈಸ್ ಸಂಸ್ಥೆಗೆ ಅನುಮತಿ ನೀಡಿರುವುದನ್ನು ದೇವೇಗೌಡರು ತೀವ್ರವಾಗಿ ಖಂಡಿಸಿದ್ದಾರೆ.

ತಮ್ಮ ಪತ್ರದಲ್ಲಿ 1997ರ ಚೌಕಟ್ಟು ಒಪ್ಪಂದವನ್ನು ಉಲ್ಲೇಖಿಸಿರುವ ದೇವೇಗೌಡರು, ರಸ್ತೆ ಹಾಗೂ ಮೂಲಸೌಕರ್ಯ ನಿರ್ಮಾಣಕ್ಕಾಗಿ ಸ್ವಾಧೀನಪಡಿಸಿಕೊಂಡ ಜಮೀನಿನಲ್ಲಿ ನಿವೇಶನಗಳನ್ನು ನಿರ್ಮಿಸಲು ಅವಕಾಶವಿಲ್ಲ ಎಂದು 2016ರಲ್ಲಿ ಕಾಂಗ್ರೆಸ್ ಸರ್ಕಾರವೇ ಸುಪ್ರೀಂ ಕೋರ್ಟ್‌ಗೆ ಪ್ರಮಾಣಪತ್ರ ಸಲ್ಲಿಸಿತ್ತು ಎಂದು ನೆನಪಿಸಿದ್ದಾರೆ.

ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್‌ಗಳು ಕೂಡ ಇಂಟರ್‌ಚೇಂಜ್ ಪ್ರದೇಶಗಳಲ್ಲಿ ನಿವೇಶನ ನಿರ್ಮಾಣ ಮಾಡುವುದು ಕಾನೂನುಬಾಹಿರ ಎಂದು ಸ್ಪಷ್ಟಪಡಿಸಿವೆ ಎಂದು ದೇವೇಗೌಡರು ತಮ್ಮ ಪತ್ರದಲ್ಲಿ ಹೇಳಿದ್ದಾರೆ. ಹೀಗಿರುವಾಗ ಸಚಿವ ಸಂಪುಟವು ನಿವೇಶನಗಳ ಹಂಚಿಕೆಗೆ ಅನುಮತಿ ನೀಡಿರುವುದು ನ್ಯಾಯಾಲಯದ ಆದೇಶಗಳಿಗೆ ವಿರುದ್ಧವಾಗಿದೆ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಮಾದಾವರ, ಕೆಂಗೇರಿ, ಕೊಮಘಟ್ಟ, ಸೋಂಪುರ, ಪಾಂತರಪಾಳ್ಯ ಸೇರಿದಂತೆ ಹಲವು ಗ್ರಾಮಗಳ ಜಮೀನುಗಳು ರಸ್ತೆ ಮೂಲಸೌಕರ್ಯ ವ್ಯಾಪ್ತಿಗೆ ಒಳಪಡುತ್ತವೆ ಎಂದು ದೇವೇಗೌಡರು ಉಲ್ಲೇಖಿಸಿದ್ದಾರೆ.

ಜುಲೈ 2026ರ ಹೈಕೋರ್ಟ್ ವಿಭಾಗೀಯ ಪೀಠದ ತೀರ್ಪನ್ನು ಉಲ್ಲೇಖಿಸಿರುವ ಅವರು, ನೈಸ್ ಸಂಸ್ಥೆಯು ಸಾರ್ವಜನಿಕ ಹಿತಾಸಕ್ತಿಯನ್ನು ಕಡೆಗಣಿಸಿ ವೈಯಕ್ತಿಕ ಲಾಭ ಮಾಡಿಕೊಂಡಿದೆ ಎಂದು ನ್ಯಾಯಾಲಯ ವೀಕ್ಷಿಸಿದೆ ಎಂದು ಹೇಳಿದ್ದಾರೆ. ಸಂಸ್ಥೆಯ ಖಾತೆಗಳ ಫೋರೆನ್ಸಿಕ್ ಆಡಿಟ್ ನಡೆಸುವಂತೆ ನ್ಯಾಯಾಲಯ ಸೂಚಿಸಿರುವುದನ್ನೂ ಅವರು ಪತ್ರದಲ್ಲಿ ಪ್ರಸ್ತಾಪಿಸಿದ್ದಾರೆ.

ಇದೇ ವೇಳೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಪ್ರಶ್ನಿಸಿರುವ ದೇವೇಗೌಡರು, ‘ನಿಜವಾದ ಫಲಾನುಭವಿಗಳು ಸಂತ್ರಸ್ತ ರೈತರೋ ಅಥವಾ ನೈಸ್ ಸಂಸ್ಥೆ ಮತ್ತು ಅದರ ಹೂಡಿಕೆದಾರರೋ? ನಿಮ್ಮ ಸಂಪುಟದಲ್ಲೂ ಹೂಡಿಕೆದಾರರಿದ್ದಾರೆಯೇ?’ ಎಂದು ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ.

ಸಚಿವ ಸಂಪುಟದ ನಿರ್ಧಾರ, ನ್ಯಾಯಾಲಯದ ಆದೇಶಗಳು ಹಾಗೂ ನೈಸ್ ಸಂಸ್ಥೆಗೆ ಸಂಬಂಧಿಸಿದ ವಿಚಾರಗಳ ಬಗ್ಗೆ ದೇವೇಗೌಡರು ತಮ್ಮ ಬಹಿರಂಗ ಪತ್ರದ ಮೂಲಕ ಸರ್ಕಾರದ ವಿರುದ್ಧ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

‘ಬಾಡಿಗೆ ಮನೆ ಸಿಕ್ಕ ತಕ್ಷಣ ಹಳೆ ಬಂಗಲೆ ಖಾಲಿ ಮಾಡುತ್ತೇನೆ’; ಸರ್ಕಾರಿ ನಿವಾಸ ವಿವಾದಕ್ಕೆ ಮಾಜಿ ಸಚಿವ ಮಹದೇವಪ್ಪ ಸ್ಪಷ್ಟನೆ

0

ಬೆಂಗಳೂರು: ಬಾಡಿಗೆ ಮನೆ ಸಿಕ್ಕ ತಕ್ಷಣ ಕ್ರೆಸೆಂಟ್ ರಸ್ತೆಯಲ್ಲಿರುವ ಹಳೆಯ ಸರ್ಕಾರಿ ಬಂಗಲೆಯನ್ನು ಖಾಲಿ ಮಾಡುತ್ತೇನೆ ಎಂದು ಮಾಜಿ ಸಚಿವ ಮಹದೇವಪ್ಪ ತಿಳಿಸಿದ್ದಾರೆ. ನಗರದ ಕ್ರೆಸೆಂಟ್ ರಸ್ತೆಯ ನಂ. 2ರ ಸರ್ಕಾರಿ ನಿವಾಸವನ್ನು ತೆರವುಗೊಳಿಸುವುದು ಹಾಗೂ ನವೀಕರಣ ಕಾಮಗಾರಿ ವಿಚಾರವಾಗಿ ಉಂಟಾಗಿರುವ ವಿವಾದಕ್ಕೆ ಅವರು ಪ್ರತಿಕ್ರಿಯಿಸಿದ್ದಾರೆ.

ಈ ಬಂಗಲೆಯನ್ನು ಇದೀಗ ಸಚಿವ ಬೈರತಿ ಸುರೇಶ್ ಅವರಿಗೆ ಹಂಚಿಕೆ ಮಾಡಲಾಗಿದೆ. ಹೀಗಾಗಿ ಅವರು ಮನೆ ಖಾಲಿ ಮಾಡುವಂತೆ ಕೇಳಿದ್ದಾರೆ. ಅವರಿಗೆ ತೊಂದರೆಯಾಗುತ್ತಿರುವುದರಿಂದ ಬೇಗನೆ ಮನೆ ಖಾಲಿ ಮಾಡುವಂತೆ ಒತ್ತಾಯಿಸುತ್ತಿರಬಹುದು. ಇದರಲ್ಲಿ ಅವರ ಯಾವುದೇ ತಪ್ಪಿಲ್ಲ ಎಂದು ಮಹದೇವಪ್ಪ ಹೇಳಿದ್ದಾರೆ.

ಇದು ಹಿರಿಯ-ಕಿರಿಯ ಎಂಬ ಪ್ರಶ್ನೆಯಲ್ಲ. ಬೈರತಿ ಸುರೇಶ್ ಅವರು ಹಾಲಿ ಸಚಿವರಾಗಿದ್ದು, ಅವರ ದೈನಂದಿನ ಕಾರ್ಯಚಟುವಟಿಕೆಗಳಿಗೆ ಯಾವುದೇ ರೀತಿಯಲ್ಲಿ ಅಡ್ಡಿಯಾಗಬಾರದು ಎಂಬುದು ತಮ್ಮ ಉದ್ದೇಶ ಎಂದು ಅವರು ತಿಳಿಸಿದ್ದಾರೆ.

ತಾವು ಈ ಹಿಂದೆ ಸಚಿವರಾಗಿದ್ದ ಸಂದರ್ಭದಲ್ಲಿ ಸರ್ಕಾರ ಈ ನಿವಾಸವನ್ನು ನೀಡಿತ್ತು. ಇದೀಗ ಸಚಿವ ಸ್ಥಾನದಲ್ಲಿಲ್ಲದ ಕಾರಣ ನಿವಾಸವನ್ನು ಬೇಗನೆ ಬಿಟ್ಟುಕೊಡುವುದು ತಮ್ಮ ಕರ್ತವ್ಯ ಎಂದು ಮಹದೇವಪ್ಪ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸ್ವಂತ ಮನೆ ಇಲ್ಲದಿರುವುದರಿಂದ ಸದ್ಯ ಬಾಡಿಗೆ ಮನೆ ಹುಡುಕುತ್ತಿದ್ದು, ಸೂಕ್ತ ಮನೆ ಅಂತಿಮವಾದ ಕೂಡಲೇ ಸರ್ಕಾರಿ ಬಂಗಲೆಯನ್ನು ಖಾಲಿ ಮಾಡುವುದಾಗಿ ಸ್ಪಷ್ಟಪಡಿಸಿದ್ದಾರೆ.

ಈ ವಿಚಾರವನ್ನು ಹಿಂದೆ ಸದನದಲ್ಲೂ ಬೈರತಿ ಸುರೇಶ್ ಪ್ರಸ್ತಾಪಿಸಿದ್ದರು. ‘ನಾನು ಆ ಮನೆಗೆ ಬರಬೇಕಣ್ಣ’ ಎಂದು ಅವರು ಹೇಳಿದ್ದರು. ಆಗಲೂ ತಾವು ಮನೆ ಹುಡುಕುತ್ತಿದ್ದು, ಮನೆ ಸಿಕ್ಕ ತಕ್ಷಣ ಖಾಲಿ ಮಾಡುವುದಾಗಿ ತಿಳಿಸಿದ್ದೆ ಎಂದು ಮಹದೇವಪ್ಪ ಹೇಳಿದ್ದಾರೆ.

ಈ ವಿಚಾರದಲ್ಲಿ ತಾವು ಯಾರ ಮೇಲೂ ತಪ್ಪು ಹುಡುಕುವುದಿಲ್ಲ. ಬಂಗಲೆ ಹಂಚಿಕೆ ಹಾಗೂ ತೆರವು ವಿಚಾರವನ್ನು ಯಾವುದೇ ವಿವಾದವಾಗಿ ನೋಡುತ್ತಿಲ್ಲ ಎಂದು ಮಹದೇವಪ್ಪ ಸ್ಪಷ್ಟಪಡಿಸಿದ್ದಾರೆ.

ರಾಜ್ಯದ 175 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿ; ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ: ಆರ್‌. ಅಶೋಕ್ ಆಗ್ರಹ

0

ಬೆಂಗಳೂರು: ರಾಜ್ಯದ 175 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿ, ಸಂಕಷ್ಟದಲ್ಲಿರುವ ರೈತರಿಗೆ ತಕ್ಷಣ ಪರಿಹಾರ ನೀಡಬೇಕು ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್‌. ಅಶೋಕ್ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಸರ್ಕಾರದ ಬರಪೀಡಿತ ತಾಲೂಕುಗಳ ಪಟ್ಟಿಯಲ್ಲಿ ತಮ್ಮ ಕ್ಷೇತ್ರವನ್ನು ಸೇರಿಸದಿದ್ದರೆ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಕಾಂಗ್ರೆಸ್ ಶಾಸಕ ಸಿ.ಎಸ್. ನಾಡಗೌಡ ಎಚ್ಚರಿಕೆ ನೀಡಿರುವ ವಿಚಾರಕ್ಕೆ ಎಕ್ಸ್‌ ಮೂಲಕ ಪ್ರತಿಕ್ರಿಯಿಸಿರುವ ಆರ್‌. ಅಶೋಕ್, ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಇದ್ದರೂ ಸರ್ಕಾರ ಕೇವಲ 101 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದೆ ಎಂದು ಟೀಕಿಸಿದ್ದಾರೆ.

101 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದ ದಿನವೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಸ್ಪಷ್ಟ ಎಚ್ಚರಿಕೆ ನೀಡಿದ್ದೆ. ರಾಜ್ಯದ 175 ತಾಲೂಕುಗಳಲ್ಲಿ ತೀವ್ರ ಬರ ಪರಿಸ್ಥಿತಿ ಇದೆ. ತಾನೇ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಕಣ್ಣಾರೆ ಕಂಡಿದ್ದು, ಈ ಕುರಿತು ಸರ್ಕಾರಕ್ಕೆ ಪತ್ರವನ್ನೂ ಬರೆದಿದ್ದೇನೆ ಎಂದು ಆರ್‌. ಅಶೋಕ್ ಹೇಳಿದ್ದಾರೆ.

ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರ ಹಾಗೂ ಅವೈಜ್ಞಾನಿಕ ಯೋಜನೆಗಳ ಮೂಲಕ ರಾಜ್ಯದ ಖಜಾನೆ ಖಾಲಿ ಮಾಡಿದೆ ಎಂದು ಆರೋಪಿಸಿದ ಅವರು, ಬರ ಘೋಷಣೆಯಲ್ಲೂ ಸರ್ಕಾರ ಚೌಕಾಸಿ ಮಾಡುತ್ತಿರುವುದು ರೈತರಿಗೆ ಅನ್ಯಾಯ ಮಾಡಿದಂತಾಗಿದೆ ಎಂದು ವಾಗ್ದಾಳಿ ನಡೆಸಿದರು.

ಮುದ್ದೇಬಿಹಾಳ ಕಾಂಗ್ರೆಸ್ ಶಾಸಕ ಸಿ.ಎಸ್. ನಾಡಗೌಡ ಅವರೇ ತಮ್ಮ ತಾಲೂಕನ್ನು ಬರಪೀಡಿತ ಪಟ್ಟಿಗೆ ಸೇರಿಸದಿದ್ದರೆ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಎಚ್ಚರಿಕೆ ನೀಡಿರುವುದು ಸರ್ಕಾರದ ರೈತ ವಿರೋಧಿ ಧೋರಣೆಗೆ ಸಾಕ್ಷಿ ಎಂದು ಆರ್‌. ಅಶೋಕ್ ಟೀಕಿಸಿದ್ದಾರೆ.

‘By birth I am an Agriculturist’ ಎಂದು ಹೇಳಿಕೊಳ್ಳುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ರೈತರ ಸಂಕಷ್ಟದ ಅರಿವು ಹಾಗೂ ಕೃಷಿ ಕ್ಷೇತ್ರದ ಬಗ್ಗೆ ಕಾಳಜಿ ಇರಬೇಕು ಎಂದು ಅವರು ಹೇಳಿದ್ದಾರೆ.

ತಕ್ಷಣವೇ ಮುದ್ದೇಬಿಹಾಳ ಸೇರಿದಂತೆ ರಾಜ್ಯದ 175 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಬೇಕು ಎಂದು ಆರ್‌. ಅಶೋಕ್ ಆಗ್ರಹಿಸಿದ್ದಾರೆ. ಅಲ್ಲದೆ, ಪ್ರಣಾಳಿಕೆಯಲ್ಲಿ ಭರವಸೆ ನೀಡಿದಂತೆ ₹5,000 ಕೋಟಿ ವಿಕೋಪ ಪರಿಹಾರ ನಿಧಿಯನ್ನು ಬಿಡುಗಡೆ ಮಾಡಬೇಕು ಹಾಗೂ ಸಂಕಷ್ಟದಲ್ಲಿರುವ ಪ್ರತಿಯೊಬ್ಬ ರೈತನಿಗೆ ಎಕರೆಗೆ ₹50,000 ತುರ್ತು ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಸರ್ಕಾರ ಇನ್ನೂ ವಿಳಂಬ ಮಾಡಿದರೆ ಅನ್ನದಾತರ ಶಾಪ ಮತ್ತು ಕಣ್ಣೀರಿನಲ್ಲಿ ಕಾಂಗ್ರೆಸ್ ಸರ್ಕಾರ ಕೊಚ್ಚಿಹೋಗುವುದು ನಿಶ್ಚಿತ ಎಂದು ಆರ್‌. ಅಶೋಕ್ ಕಿಡಿಕಾರಿದ್ದಾರೆ.

ಬಂಗಾರದ ಬೆಲೆಯಲ್ಲಿ ಮತ್ತೆ ಕುಸಿತ: ಇಂದು ಬೆಂಗಳೂರಿನಲ್ಲಿ ಎಷ್ಟಿದೆ ಚಿನ್ನದ ಬೆಲೆ?

0

ಬೆಂಗಳೂರು: ಆಗಸ್ಟ್ ತಿಂಗಳಲ್ಲಿ ಭಾರಿ ಏರಿಕೆ ಕಂಡಿದ್ದ ಚಿನ್ನದ ಬೆಲೆ ಸೆಪ್ಟೆಂಬರ್‌ನಲ್ಲಿ ಇಳಿಕೆಯ ಹಾದಿ ಹಿಡಿದಿದೆ. ಸೆಪ್ಟೆಂಬರ್ ತಿಂಗಳ ಎರಡನೇ ವಾರದ ಆರಂಭವಾದ ಸೋಮವಾರವೂ ಚಿನ್ನದ ಬೆಲೆಯಲ್ಲಿ ಇಳಿಕೆ ದಾಖಲಾಗಿದ್ದು, ಬೆಳ್ಳಿ ಬೆಲೆ ಮಾತ್ರ ಯಾವುದೇ ಬದಲಾವಣೆಯಾಗದೆ ಸ್ಥಿರವಾಗಿದೆ.

ಸೆಪ್ಟೆಂಬರ್ 7, 2026ರಂದು 24 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಪ್ರತಿ ಗ್ರಾಂಗೆ ₹65 ಇಳಿಕೆಯಾಗಿದೆ. ಇದರೊಂದಿಗೆ ಬೆಂಗಳೂರಿನಲ್ಲಿ 24 ಕ್ಯಾರೆಟ್ ಚಿನ್ನದ ಒಂದು ಗ್ರಾಂ ಬೆಲೆ ₹15,415ಕ್ಕೆ ಇಳಿಕೆಯಾಗಿದೆ. 10 ಗ್ರಾಂ ಚಿನ್ನದ ಬೆಲೆಯಲ್ಲಿ ₹650 ಕಡಿಮೆಯಾಗಿದ್ದು, ಇದೀಗ ₹1,54,150ಕ್ಕೆ ದಾಖಲಾಗಿದೆ.

ಇನ್ನು 22 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ ಇಳಿಕೆ ಕಂಡುಬಂದಿದೆ. ಪ್ರತಿ ಗ್ರಾಂಗೆ ₹60 ಕಡಿಮೆಯಾಗಿದ್ದು, ಒಂದು ಗ್ರಾಂ ಚಿನ್ನದ ಬೆಲೆ ₹14,130ಕ್ಕೆ ಇಳಿಕೆಯಾಗಿದೆ. 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ ₹600 ಇಳಿಕೆಯಾಗಿ ₹1,41,300ಕ್ಕೆ ತಲುಪಿದೆ.

ಬೆಂಗಳೂರಿನಲ್ಲಿ ಶುದ್ಧ 24 ಕ್ಯಾರೆಟ್ ಚಿನ್ನದ ಒಂದು ಗ್ರಾಂ ಬೆಲೆ ಸದ್ಯ ₹15,415 ಇದೆ. ಮತ್ತೊಂದೆಡೆ, ಬೆಳ್ಳಿ ಬೆಲೆ ಇಂದು ಯಾವುದೇ ಬದಲಾವಣೆಯಾಗದೆ ಪ್ರತಿ ಗ್ರಾಂಗೆ ₹250ರಲ್ಲೇ ಸ್ಥಿರವಾಗಿದೆ. ಒಂದು ಕೆಜಿ ಬೆಳ್ಳಿಯ ಬೆಲೆ ₹2,50,000 ಇದೆ.

ಸೆಪ್ಟೆಂಬರ್ ತಿಂಗಳಲ್ಲಿ ಇದುವರೆಗೆ 24 ಕ್ಯಾರೆಟ್ ಚಿನ್ನದ ಕನಿಷ್ಠ ಬೆಲೆ ಪ್ರತಿ ಗ್ರಾಂಗೆ ₹15,202 ಆಗಿದ್ದರೆ, ಗರಿಷ್ಠ ಬೆಲೆ ₹15,666ಕ್ಕೆ ಏರಿಕೆಯಾಗಿತ್ತು. ಇದೀಗ ಸೆಪ್ಟೆಂಬರ್ 7ರಂದು ಪ್ರತಿ ಗ್ರಾಂಗೆ ₹15,415 ದರ ದಾಖಲಾಗಿದೆ.

ಚಿಕ್ಕಬಳ್ಳಾಪುರ–ಕೋಲಾರದಲ್ಲಿ ಎರಡು ಪ್ರತ್ಯೇಕ ರಸ್ತೆ ಅಪಘಾತ! ಭೀಕರ ದುರ್ಘಟನೆಯಲ್ಲಿ 7 ಮಂದಿ ಸಾವು

0

ಬೆಂಗಳೂರು: ಕರ್ನಾಟಕದ ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಭೀಕರ ರಸ್ತೆ ಅಪಘಾತಗಳಲ್ಲಿ ಒಟ್ಟು ಏಳು ಮಂದಿ ಮೃತಪಟ್ಟಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಹೂವು ಕಟಾವಿಗೆ ತೆರಳುತ್ತಿದ್ದ ಕೂಲಿ ಕಾರ್ಮಿಕರಿದ್ದ ಓಮ್ನಿ ಕಾರು ಮಿನಿ ಗೂಡ್ಸ್ ವಾಹನಕ್ಕೆ ಡಿಕ್ಕಿಯಾಗಿ ಮೂವರು ಮಹಿಳೆಯರು ಮೃತಪಟ್ಟಿದ್ದರೆ, ಕೋಲಾರದಲ್ಲಿ ತಿರುಪತಿ ದರ್ಶನ ಮುಗಿಸಿ ಬೆಂಗಳೂರಿಗೆ ಹಿಂದಿರುಗುತ್ತಿದ್ದ ಕಾರು ಪಲ್ಟಿಯಾಗಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಕೊತ್ತನೂರು ಗೇಟ್ ಸಮೀಪ ಓಮ್ನಿ ಕಾರು ಹಾಗೂ ಮಿನಿ ಗೂಡ್ಸ್ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದೆ. ಮಲ್ಲಿಕಾರ್ಜುನಪುರ ಗ್ರಾಮದ 10 ಮಂದಿ ಕೂಲಿ ಕಾರ್ಮಿಕರನ್ನು ಹೂವು ಕಟಾವು ಮಾಡಲು ರಾಮಚಂದ್ರಪ್ಪ ಎಂಬುವವರು ಓಮ್ನಿ ಕಾರಿನಲ್ಲಿ ಹುಜುಗೂರು ಗ್ರಾಮಕ್ಕೆ ಕರೆದೊಯ್ಯುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.

ಅಪಘಾತದ ತೀವ್ರತೆಗೆ ಮಲ್ಲಿಕಾರ್ಜುನಪುರ ಮೂಲದ ಮೂವರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಗೊಂಡವರನ್ನು ತಕ್ಷಣ ಶಿಡ್ಲಘಟ್ಟ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಘಟನೆಗೆ ಸಂಬಂಧಿಸಿದಂತೆ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇನ್ನು ಕೋಲಾರ ಜಿಲ್ಲೆಯ ಕೆಜಿಎಫ್ ತಾಲೂಕಿನ ದೊಡ್ಡಕಾರಿ ಗ್ರಾಮದ ಬಳಿ ಚೆನ್ನೈ-ಬೆಂಗಳೂರು ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ತಿರುಪತಿಯಲ್ಲಿ ದರ್ಶನ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗುತ್ತಿದ್ದ ವೇಳೆ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

ಅಪಘಾತದಲ್ಲಿ ಕಾರಿನಲ್ಲಿದ್ದ ಬೆಂಗಳೂರು ಮೂಲದ ದೇವೇಂದ್ರ ಕುಮಾರ್ (40), ಜಿಷ್ಣು (15), ದೀಕ್ಷಿತಾ (20) ಮತ್ತು ಶಾರದಾಬಾಯಿ (70) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಇನ್ನುಳಿದ ನಾಲ್ವರಿಗೆ ತೀವ್ರ ಗಾಯಗಳಾಗಿದ್ದು, ಅವರನ್ನು ಕೋಲಾರ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಘಟನೆಗೆ ಸಂಬಂಧಿಸಿದಂತೆ ಬೇತಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತದ ನಿಖರ ಕಾರಣದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

‘ಭ್ರಷ್ಟಾಚಾರದಲ್ಲಿ ಮುಳುಗಿರುವವರು ಸತ್ಯ ಹರಿಶ್ಚಂದ್ರನಂತೆ ಮಾತನಾಡುತ್ತಿದ್ದಾರೆ’; ಬಿಜೆಪಿ ವಿರುದ್ಧ ಬಿ.ಕೆ. ಹರಿಪ್ರಸಾದ್ ವಾಗ್ದಾಳಿ

0

ಮಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹಮ್ಮಿಕೊಂಡಿರುವ ಬಳ್ಳಾರಿ ಚಲೋ ಪಾದಯಾತ್ರೆಯನ್ನು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ತೀವ್ರವಾಗಿ ಟೀಕಿಸಿದ್ದಾರೆ. ಬಿಜೆಪಿ ನಡೆಸುತ್ತಿರುವುದು ಜನರಿಗಾಗಿ ನಡೆಯುತ್ತಿರುವ ಪಾದಯಾತ್ರೆಯಲ್ಲ, ಸಂಪೂರ್ಣವಾಗಿ ‘ಪೇಡ್ ಪಾದಯಾತ್ರೆ’ ಎಂದು ಅವರು ಲೇವಡಿ ಮಾಡಿದ್ದಾರೆ.

ಮಂಗಳೂರಿನಲ್ಲಿ ಸೋಮವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಹರಿಪ್ರಸಾದ್, ಹೇಗೆ ಪೇಡ್ ನ್ಯೂಸ್ ಬರುತ್ತದೆಯೋ ಅದೇ ರೀತಿಯಲ್ಲಿ ಬಿಜೆಪಿಯವರು ಪೇಡ್ ಪಾದಯಾತ್ರೆ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು. ಈ ಪಾದಯಾತ್ರೆಯಲ್ಲಿ ಜನಸಾಮಾನ್ಯರ ಯಾವುದೇ ಪಾಲ್ಗೊಳ್ಳುವಿಕೆ ಅಥವಾ ಮನ್ನಣೆ ಇಲ್ಲ ಎಂದು ಅವರು ಹೇಳಿದರು.

ರಾಜ್ಯ ಬಿಜೆಪಿಯಲ್ಲಿ ನಾಯಕತ್ವದ ವಿಚಾರವಾಗಿ ಭಾರಿ ಗೊಂದಲವಿದ್ದು, ಹಲವು ಬಿಜೆಪಿ ನಾಯಕರೇ ಪಾದಯಾತ್ರೆಯಲ್ಲಿ ಭಾಗವಹಿಸಿಲ್ಲ ಎಂದು ಹರಿಪ್ರಸಾದ್ ಹೇಳಿದರು. ಬಿ.ವೈ. ವಿಜಯೇಂದ್ರ ಅವರ ನಾಯಕತ್ವವನ್ನು ಪುನಃಸ್ಥಾಪಿಸಲು ಹಾಗೂ ನಿರುದ್ಯೋಗಿ ನಾಯಕರಿಗೆ ಕೆಲಸ ತೋರಿಸಲು ಈ ಪಾದಯಾತ್ರೆ ನಡೆಸಲಾಗುತ್ತಿದೆ ಎಂದು ಅವರು ಆರೋಪಿಸಿದರು.

ಜನಸಾಮಾನ್ಯರ ಬಗ್ಗೆ ಬಿಜೆಪಿಗೆ ನಿಜವಾಗಿಯೂ ಕಾಳಜಿ ಇದ್ದರೆ, ವಿಧಾನಮಂಡಲದ ಸದನದಲ್ಲಿ ಈ ವಿಚಾರಗಳ ಕುರಿತು ಚರ್ಚೆ ನಡೆಸಲು ಏನು ಅಡ್ಡಿಯಾಗಿತ್ತು ಎಂದು ಪ್ರಶ್ನಿಸಿದ ಅವರು, ಪಾದಯಾತ್ರೆ ನಡೆಸುವ ಬದಲು ಸದನದಲ್ಲಿ ಸರ್ಕಾರವನ್ನು ಪ್ರಶ್ನಿಸಬಹುದಿತ್ತು ಎಂದರು.

ಇದೇ ವೇಳೆ ಬಿಜೆಪಿ ನಾಯಕರ ಭ್ರಷ್ಟಾಚಾರದ ಆರೋಪಗಳ ಬಗ್ಗೆಯೂ ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದರು. ಗಣಿಗಾರಿಕೆ ಹಾಗೂ ಭ್ರಷ್ಟಾಚಾರದ ಪ್ರಕರಣಗಳಲ್ಲಿ ಜೈಲು ಸೇರಿದ್ದವರು ಇದೀಗ ಕಾಂಗ್ರೆಸ್ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಆರೋಪಿಸಿದರು.

ಚೆಕ್ ಮೂಲಕ ಲಂಚ ಪಡೆದ ಆರೋಪದಲ್ಲಿ ಜೈಲು ಪಾಲಾದ ಇತಿಹಾಸ ಸೃಷ್ಟಿಸಿದವರು ಇದೀಗ ಸತ್ಯ ಹರಿಶ್ಚಂದ್ರನಂತೆ ಮಾತನಾಡುವುದನ್ನು ಒಪ್ಪಲು ಸಾಧ್ಯವಿಲ್ಲ ಎಂದು ಹರಿಪ್ರಸಾದ್ ಟೀಕಿಸಿದರು. ಭ್ರಷ್ಟಾಚಾರದ ಆರೋಪಗಳನ್ನು ಎದುರಿಸುತ್ತಿರುವವರು ನೈತಿಕತೆಯ ಪಾಠ ಹೇಳುವುದು ಸರಿಯಲ್ಲ ಎಂದು ಅವರು ವಾಗ್ದಾಳಿ ನಡೆಸಿದರು.

ರಾಜ್ಯದಲ್ಲಿನ ಬರ ಪರಿಸ್ಥಿತಿ ವಿಚಾರವಾಗಿಯೂ ಬಿಜೆಪಿ ವಿರುದ್ಧ ಹರಿಪ್ರಸಾದ್ ಟೀಕಾಪ್ರಹಾರ ನಡೆಸಿದರು. ಕಂದಾಯ ಸಚಿವರು ಈಗಾಗಲೇ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಿದ್ದಾರೆ. ಈ ಕುರಿತು ವರದಿಯನ್ನು ಖುದ್ದಾಗಿ ಪರಿಶೀಲಿಸಲು ಮುಖ್ಯಮಂತ್ರಿ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ. ಇದರಲ್ಲಿ ತಪ್ಪೇನಿದೆ ಎಂದು ಅವರು ಪ್ರಶ್ನಿಸಿದರು.

ಪ್ರವಾಹದ ಸಂದರ್ಭದಲ್ಲಿ ಪ್ರಧಾನಿ ಮಹಾರಾಷ್ಟ್ರ ಹಾಗೂ ಆಂಧ್ರಪ್ರದೇಶಕ್ಕೆ ತೆರಳಿ ವೈಮಾನಿಕ ಸಮೀಕ್ಷೆ ನಡೆಸಿರಲಿಲ್ಲವೇ ಎಂದು ಪ್ರಶ್ನಿಸಿದ ಹರಿಪ್ರಸಾದ್, ಕರ್ನಾಟಕಕ್ಕೆ ಮಾತ್ರ ಪ್ರಧಾನಿ ಆಗಮಿಸಲಿಲ್ಲ ಎಂದು ಟೀಕಿಸಿದರು. ಕೇಂದ್ರದ ಬಳಿ ಪ್ರಧಾನಿ ಹಾಗೂ ಗೃಹ ಸಚಿವರನ್ನು ಭೇಟಿ ಮಾಡಲು ಸಮಯ ಕೇಳಿದರೂ ಅವಕಾಶ ನೀಡಲಿಲ್ಲ ಎಂದು ಅವರು ಆರೋಪಿಸಿದರು.

ಯುವತಿಗೆ ಪೆಪ್ಪರ್ ಸ್ಪ್ರೇ ಮಾಡಿ ಅತ್ಯಾಚಾರ ಆರೋಪ: ಬೆತ್ತಲೆ ವಿಡಿಯೋ ತೋರಿಸಿ ಬ್ಲ್ಯಾಕ್ ಮೇಲ್ ಮಾಡಿದ್ದ ವೈದ್ಯನ ವಿರುದ್ಧ FIR

0

ಬೆಂಗಳೂರು: ಯುವತಿಗೆ ಪೆಪ್ಪರ್‌ ಸ್ಪ್ರೇ ಬಳಸಿ ಪ್ರಜ್ಞೆ ತಪ್ಪಿಸಿ ಅತ್ಯಾಚಾರ ಎಸಗಿದ ಬಳಿಕ, ಆಕೆಯ ಬೆತ್ತಲೆ ವಿಡಿಯೋ ಹಾಗೂ ಫೋಟೋಗಳನ್ನು ಬಳಸಿಕೊಂಡು ಬ್ಲ್ಯಾಕ್‌ಮೇಲ್ ಮಾಡಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ವೈದ್ಯನ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ದೂರಿನ ಪ್ರಕಾರ, ಡಯಾಗ್ನೋಸ್ಟಿಕ್ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ವೈದ್ಯ ಯುವರಾಜ್ ಮನೋಹರ್ ಎಂಬುವರ ವಿರುದ್ಧ ಯುವತಿ ಆರೋಪ ಮಾಡಿದ್ದಾರೆ. ಕಳೆದ ವರ್ಷ ತಮ್ಮ ಕಚೇರಿಯಲ್ಲಿ ಪೈಲ್ಸ್ ಪರೀಕ್ಷಿಸುವ ನೆಪದಲ್ಲಿ ತಮ್ಮನ್ನು ಕರೆದುಕೊಂಡು ಹೋಗಿ ಪೆಪ್ಪರ್‌ ಸ್ಪ್ರೇ ಬಳಸಿ ಪ್ರಜ್ಞೆ ತಪ್ಪಿಸಿ ಅತ್ಯಾಚಾರ ಎಸಗಿದ್ದಾರೆ ಎಂದು ಯುವತಿ ದೂರಿನಲ್ಲಿ ತಿಳಿಸಿದ್ದಾರೆ ಎನ್ನಲಾಗಿದೆ.

ಅತ್ಯಾಚಾರದ ಬಳಿಕ ತಮ್ಮ ಫೋಟೋ ಹಾಗೂ ವಿಡಿಯೋಗಳನ್ನು ಮಾಡಿಕೊಂಡು, ಈ ವಿಚಾರವನ್ನು ಯಾರಿಗಾದರೂ ತಿಳಿಸಿದರೆ ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದರು ಎಂದು ಯುವತಿ ಆರೋಪಿಸಿದ್ದಾರೆ.

ಬ್ಲ್ಯಾಕ್‌ಮೇಲ್ ಮೂಲಕ ಕಳೆದೊಂದು ವರ್ಷದಿಂದ ಹಲವು ಬಾರಿ ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಯುವತಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ ಎನ್ನಲಾಗಿದೆ. ಅಲ್ಲದೆ, ಆರೋಪಿ ವೈದ್ಯನೇ ಬಾಡಿಗೆ ಮನೆಯನ್ನು ಮಾಡಿಕೊಟ್ಟಿದ್ದು, ಬಳಿಕ ಅಲ್ಲಿಗೆ ತೆರಳಿ ಯುವತಿಯೊಂದಿಗೆ ಹಲವು ಬಾರಿ ದೈಹಿಕ ಸಂಪರ್ಕ ಬೆಳೆಸಿದ್ದಾನೆ ಎಂಬ ಆರೋಪವೂ ಕೇಳಿಬಂದಿದೆ.

ಇತ್ತೀಚೆಗೆ ಯುವತಿಯನ್ನು ಆಕೆಯ ಜಾತಿಯ ವಿಚಾರ ಮುಂದಿಟ್ಟುಕೊಂಡು ಕೆಲಸದಿಂದ ತೆಗೆದುಹಾಕಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಘಟನೆಯಿಂದ ನೊಂದಿರುವ ಯುವತಿ, ಆರೋಪಿ ವೈದ್ಯನೊಂದಿಗೆ ಇರುವ ಫೋಟೋಗಳನ್ನು ಬಿಡುಗಡೆ ಮಾಡಿ ನ್ಯಾಯಕ್ಕಾಗಿ ಮನವಿ ಮಾಡಿದ್ದಾರೆ ಎನ್ನಲಾಗಿದೆ. ವೈದ್ಯನ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ದೂರು ನೀಡಿದ್ದಾರೆ.

ಯುವತಿಯ ದೂರಿನ ಆಧಾರದ ಮೇಲೆ ಕೊಡಿಗೇಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಗಳ ಸತ್ಯಾಸತ್ಯತೆ ಕುರಿತು ತನಿಖೆ ಆರಂಭಿಸಿದ್ದಾರೆ. ಪ್ರಕರಣದ ತನಿಖೆ ಮುಂದುವರಿದಿದ್ದು, ಪೊಲೀಸರ ತನಿಖೆ ಹಾಗೂ ಮುಂದಿನ ಕಾನೂನು ಪ್ರಕ್ರಿಯೆಯಲ್ಲಿ ಘಟನೆಯ ಸಂಪೂರ್ಣ ವಿವರಗಳು ಸ್ಪಷ್ಟವಾಗಬೇಕಿದೆ.

ರಾಯರ ಭಕ್ತರೇ ಎಚ್ಚರ! ಮಂತ್ರಾಲಯ ಮಠದ ಹೆಸರಿನಲ್ಲಿ ಸೈಬರ್ ವಂಚನೆ

0

ರಾಯಚೂರು: ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಹೆಸರಿನಲ್ಲಿ ಆನ್‌ಲೈನ್ ವಂಚನೆ ನಡೆಯುತ್ತಿರುವ ಆರೋಪಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ ಭಕ್ತರು ಎಚ್ಚರಿಕೆಯಿಂದ ಇರಬೇಕು ಎಂದು ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಎಚ್ಚರಿಕೆ ನೀಡಿದ್ದಾರೆ.

ಆರಾಧನಾ ಮಹೋತ್ಸವ, ಗುರು ವೈಭವೋತ್ಸವ ಸೇರಿದಂತೆ ವಿಶೇಷ ದಿನಗಳಲ್ಲಿ ಮಾತ್ರವಲ್ಲದೆ ಸಾಮಾನ್ಯ ದಿನಗಳಲ್ಲೂ ರಾಯರ ಭಕ್ತರನ್ನು ಗುರಿಯಾಗಿಸಿಕೊಂಡು ಸೈಬರ್ ವಂಚನೆ ನಡೆಸಲಾಗುತ್ತಿದೆ ಎನ್ನಲಾಗಿದೆ. ರೂಂ ಬುಕ್ಕಿಂಗ್, ಪರಿಮಳ ಪ್ರಸಾದ ಆನ್‌ಲೈನ್‌ನಲ್ಲಿ ಒದಗಿಸುವುದು ಹಾಗೂ ದೇಣಿಗೆ ಸಂಗ್ರಹ ಸೇರಿದಂತೆ ವಿವಿಧ ಸೇವೆಗಳ ಹೆಸರಿನಲ್ಲಿ ಹಣ ವಸೂಲಿ ಮಾಡುತ್ತಿರುವ ಬಗ್ಗೆ ಆರೋಪಗಳು ಕೇಳಿಬಂದಿವೆ.

ಮಠಕ್ಕೆ ಸಂಬಂಧಿಸಿದ ಯಾವುದೇ ಸೇವೆ ಅಥವಾ ಮಾಹಿತಿ ಅಗತ್ಯವಿದ್ದಲ್ಲಿ ಭಕ್ತರು ನೇರವಾಗಿ ಮಠದ ಕಾರ್ಯಾಲಯ ಅಥವಾ ಆಡಳಿತ ಮಂಡಳಿಯನ್ನು ಸಂಪರ್ಕಿಸುವಂತೆ ಶ್ರೀ ಸುಬುಧೇಂದ್ರ ತೀರ್ಥರು ಸಲಹೆ ನೀಡಿದ್ದಾರೆ.

ದೇಣಿಗೆ ನೀಡುವವರು ಹಾಗೂ ವಿವಿಧ ಸೇವೆಗಳನ್ನು ಪಡೆಯಲು ಮುಂದಾಗುವವರು ಖಾಸಗಿ ವ್ಯಕ್ತಿಗಳು ಅಥವಾ ಅನಧಿಕೃತ ಆನ್‌ಲೈನ್ ವೇದಿಕೆಗಳನ್ನು ನಂಬಿ ಹಣ ಕಳೆದುಕೊಳ್ಳಬಾರದು ಎಂದು ಸೂಚಿಸಲಾಗಿದೆ. ಯಾವುದೇ ಅನುಮಾನ ಬಂದರೂ ಮೊದಲು ಮಠದ ಅಧಿಕೃತ ಕಚೇರಿಯನ್ನು ಸಂಪರ್ಕಿಸಿ ಮಾಹಿತಿ ಖಚಿತಪಡಿಸಿಕೊಂಡ ಬಳಿಕವೇ ಹಣ ಪಾವತಿಸುವಂತೆ ಭಕ್ತರಿಗೆ ಮನವಿ ಮಾಡಲಾಗಿದೆ.

ಕೋಲಾರದಲ್ಲಿ ಭೀಕರ ಅಪಘಾತ; ಡಿವೈಡರ್‌ಗೆ ಕಾರು ಡಿಕ್ಕಿಯಾಗಿ ನಾಲ್ವರು ಸಾವು!

0

ಕೋಲಾರ: ಡಿವೈಡರ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮೃತಪಟ್ಟಿರುವ ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್ ತಾಲ್ಲೂಕಿನ ದೊಡ್ಡಕಾರಿ ಬಳಿ ನಡೆದಿದೆ.

ಮೃತರನ್ನು ಬೆಂಗಳೂರಿನ ವಿದ್ಯಾರಣ್ಯಪುರ ಮೂಲದ ಶಾರದಮ್ಮ (70), ದೀಕ್ಷಿತ್ (25), ದೇವೇಂದ್ರ ಕುಮಾರ್ (41) ಹಾಗೂ ಜಿಷ್ಣು (13) ಎಂದು ಗುರುತಿಸಲಾಗಿದೆ.

ಕುಟುಂಬಸ್ಥರು ತಿರುಪತಿಗೆ ತೆರಳಿ ತಿಮ್ಮಪ್ಪನ ದರ್ಶನ ಪಡೆದು ಬೆಂಗಳೂರಿಗೆ ವಾಪಸ್ ಆಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಟೊಯೋಟಾ ರಿಯಾನ್ ಕಾರು ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆಯಲ್ಲಿ ವಿಕಾಸ್, ನೀತು ಹಾಗೂ ಆದ್ವಿಕ ಗಾಯಗೊಂಡಿದ್ದು, ಅವರನ್ನು ಬಂಗಾರಪೇಟೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಗಾಯಾಳುಗಳಿಗೆ ಚಿಕಿತ್ಸೆ ಮುಂದುವರಿದಿದೆ.

ಘಟನೆ ಕುರಿತು ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

‘ನೀವ್ ಬರ್ತಿರಿ, ಕಾರ್ಯಕ್ರಮ ಮಾಡ್ತಿರಿ, ಹೋಗ್ತಿರಿ ಅಷ್ಟೇ!’ ಪ್ರಜಾಸೇವಾ ಕಾರ್ಯಕ್ರಮದಲ್ಲಿ ಅಧಿಕಾರಿಗಳಿಗೆ ಹಿಗ್ಗಾಮುಗ್ಗಾ ತರಾಟೆ

0

ಗದಗ: ‘ನೀವ್ ಬರ್ತಿರಿ, ಇಂತಾ ಪಂಕ್ಷನ್ ಮಾಡ್ತಿರಿ, ಹೊಗ್ತಿರಿ ಅಷ್ಟೇ. ಅರ್ಜಿ ಸ್ವೀಕರಿಸಿ ಕುಂತರೇ ಆಗಲ್ಲ, ಕೆಲಸ ಮಾಡಬೇಕು’ ಎಂದು ಸ್ಥಳೀಯರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಘಟನೆ ಗಜೇಂದ್ರಗಡ ತಾಲೂಕಿನ ನರೇಗಲ್ ಪಟ್ಟಣದಲ್ಲಿ ನಡೆದ ಪ್ರಜಾಸೇವಾ ಕಾರ್ಯಕ್ರಮದಲ್ಲಿ ನಡೆದಿದೆ.

ಕಾರ್ಯಕ್ರಮದಲ್ಲಿ ಸಾರ್ವಜನಿಕರು ತಮ್ಮ ವಿವಿಧ ಸಮಸ್ಯೆಗಳನ್ನು ಅಧಿಕಾರಿಗಳ ಮುಂದೆ ಬಿಚ್ಚಿಟ್ಟಿದ್ದು, ಹಲವು ವರ್ಷಗಳಿಂದ ಸಮಸ್ಯೆಗಳನ್ನು ಹೇಳಿಕೊಂಡು ಅರ್ಜಿ ಸಲ್ಲಿಸುತ್ತಿದ್ದರೂ ಪರಿಹಾರ ಮಾತ್ರ ದೊರೆಯುತ್ತಿಲ್ಲ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಮೂರು ತಿಂಗಳಿಂದ ಗೃಹಲಕ್ಷ್ಮಿ ಯೋಜನೆಯ ಹಣ ಖಾತೆಗೆ ಜಮೆಯಾಗಿಲ್ಲ. ಈ ಕುರಿತು ಅರ್ಜಿ ಸಲ್ಲಿಸಿದರೂ ಯಾವುದೇ ಕ್ರಮವಾಗಿಲ್ಲ ಎಂದು ಮಹಿಳೆಯರು ಅಸಮಾಧಾನ ವ್ಯಕ್ತಪಡಿಸಿದರು.

‘ಕೊಟ್ಟ ಅಪ್ಲಿಕೇಶನ್‌ಗಳು ಮೂಲೆಯಲ್ಲಿ ಬಿದ್ದಿರುತ್ತವೆ. ಪ್ರತಿ ಬಾರಿ ಅರ್ಜಿ ಸ್ವೀಕರಿಸುತ್ತೀರಿ, ಕೆಲಸ ಮಾತ್ರ ಆಗುವುದಿಲ್ಲ’ ಎಂದು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ತೊಂಡಿಹಾಳ ರಸ್ತೆಯ ದುಸ್ಥಿತಿ ಕುರಿತು ಸ್ಥಳೀಯರು ಅಧಿಕಾರಿಗಳ ಗಮನ ಸೆಳೆದರು. 15ರಿಂದ 20 ವರ್ಷಗಳಿಂದ ರಸ್ತೆ ದುರಸ್ತಿ ನಡೆದಿಲ್ಲ ಎಂದು ಆರೋಪಿಸಿದ ಗ್ರಾಮಸ್ಥರು, ರಸ್ತೆಯ ವಾಸ್ತವ ಸ್ಥಿತಿ ತಿಳಿಯಲು ಅಧಿಕಾರಿಗಳಿಗೆ ಸವಾಲು ಹಾಕಿದರು.

‘ಒಂದ್ಸಲ ಟ್ರ್ಯಾಕ್ಟರ್‌ನಲ್ಲಿ ಆ ರಸ್ತೆಗೆ ಹೋಗಿ ಬರೋಣ ಬನ್ನಿ’ ಎಂದು ಅಧಿಕಾರಿಗಳಿಗೆ ಹೇಳಿ, ರಸ್ತೆಯ ದುಸ್ಥಿತಿಯನ್ನು ಸ್ಥಳಕ್ಕೆ ಬಂದು ನೋಡುವಂತೆ ಒತ್ತಾಯಿಸಿದರು.

ಪಟ್ಟಣದಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದರೂ ಈವರೆಗೆ ಸಮರ್ಪಕವಾಗಿ ಬಗೆಹರಿಸಿಲ್ಲ ಎಂದು ಸ್ಥಳೀಯರು ದೂರಿದರು. ಹಲವು ಬಾರಿ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಯಾವುದೇ ಶಾಶ್ವತ ಪರಿಹಾರ ದೊರೆತಿಲ್ಲ ಎಂದು ಅಸಮಾಧಾನ ಹೊರಹಾಕಿದರು.

ಪ್ರಜಾಸೇವಾ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಒಂದರ ಹಿಂದೆ ಒಂದರಂತೆ ತಮ್ಮ ಸಮಸ್ಯೆಗಳನ್ನು ಅಧಿಕಾರಿಗಳ ಮುಂದಿಟ್ಟರು. ಪ್ರತಿ ಬಾರಿ ಅರ್ಜಿ ಸ್ವೀಕರಿಸಿ ಭರವಸೆ ನೀಡಲಾಗುತ್ತದೆ. ಆದರೆ, ಸಮಸ್ಯೆಗಳು ಮಾತ್ರ ಬಗೆಹರಿಯುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸ್ಥಳೀಯರ ಆಕ್ರೋಶ ತೀವ್ರಗೊಂಡ ಹಿನ್ನೆಲೆಯಲ್ಲಿ ಅಧಿಕಾರಿಗಳು ಕೆಲಕಾಲ ಮೌನವಾಗಿ ಕುಳಿತುಕೊಳ್ಳುವಂತಾಯಿತು. ಸಾರ್ವಜನಿಕರ ಸಮಸ್ಯೆಗಳಿಗೆ ಕೇವಲ ಅರ್ಜಿ ಸ್ವೀಕರಿಸುವುದಕ್ಕೆ ಸೀಮಿತವಾಗದೆ, ತ್ವರಿತವಾಗಿ ಸ್ಪಂದಿಸಿ ಪರಿಹಾರ ಕಲ್ಪಿಸಬೇಕು ಎಂಬ ಒತ್ತಾಯ ಕೇಳಿಬಂತು.