Home Blog

ಅಮೃತ್ 2.0 ಅನುದಾನದಿಂದ ಗದಗದ ನೀರಿನ ಕನಸು ನನಸು: ಅನಿಲ್ ಮೆಣಸಿನಕಾಯಿ

0

ವಿಜಯಸಾಕ್ಷಿ ಸುದ್ದಿ, ಗದಗ: ಗದಗ-ಬೆಟಗೇರಿ ಅವಳಿ ನಗರದ ಬಹುದಿನಗಳ ಕನಸಾಗಿದ್ದ ಕುಡಿಯುವ ನೀರಿನ ಸಮಸ್ಯೆ ಪರಿಹಾರ ಹಾಗೂ ರೈತರ ಬದುಕಿಗೆ ಹೊಸ ಆಶಾಕಿರಣ ಮೂಡಿಸುವ ನೀರಾವರಿ ಯೋಜನೆಗಳಿಗೆ ಬೃಹತ್ ಅನುದಾನ ದೊರೆತು ಕಾಮಗಾರಿಗಳಿಗೆ ಚಾಲನೆ ಸಿಕ್ಕಿರುವುದು ಸಂತಸ ತಂದಿದೆ ಎಂದು ಬಿಜೆಪಿ ಮುಖಂಡ ಅನಿಲ್ ಮೆಣಸಿನಕಾಯಿ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕೇಂದ್ರ ಸರ್ಕಾರದ ‘ಅಮೃತ್ 2.0’ ಯೋಜನೆಯಡಿ ಗದಗ-ಬೆಟಗೇರಿ ಅವಳಿ ನಗರದ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ₹42 ಕೋಟಿ ಅನುದಾನ ಬಿಡುಗಡೆಯಾಗಿರುವುದನ್ನು ಸ್ವಾಗತಿಸಿದ್ದಾರೆ. ಡಂಬಳದಿಂದ ಗದಗ ‘ಎ’ ಪಾಯಿಂಟ್‌ವರೆಗೆ ಹೊಸ ಪೈಪ್‌ಲೈನ್ ಸಂಪರ್ಕ ಕಲ್ಪಿಸುವುದು ಹಾಗೂ ನಗರದ ವಿವಿಧ ಭಾಗಗಳಲ್ಲಿ ಐದು ಬೃಹತ್ ಓವರ್‌ಹೆಡ್ ಟ್ಯಾಂಕ್‌ಗಳ ನಿರ್ಮಾಣಕ್ಕಾಗಿ ಈಗಾಗಲೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿರುವುದು ಅಭಿವೃದ್ಧಿಗೆ ಹೊಸ ವೇಗ ನೀಡಲಿದೆ ಎಂದು ಹೇಳಿದ್ದಾರೆ.

ಈ ಮಹತ್ವಾಕಾಂಕ್ಷಿ ಯೋಜನೆಗೆ ಅಗತ್ಯ ಅನುದಾನ ದೊರಕಿಸುವಲ್ಲಿ ಯಶಸ್ವಿಯಾದ ಗದಗ-ಹಾವೇರಿ ಸಂಸದ ಬಸವರಾಜ್ ಬೊಮ್ಮಾಯಿ ಅವರಿಗೆ ಗದಗ ಜಿಲ್ಲೆಯ ಜನತೆಯ ಪರವಾಗಿ ಅಭಿನಂದನೆ ಸಲ್ಲಿಸಿರುವ ಅವರು, ಹಮ್ಮಿಗಿಯಿಂದ ಡಂಬಳವರೆಗೆ ಬಾಕಿ ಉಳಿದಿರುವ ಕುಡಿಯುವ ನೀರಿನ ಕಾಮಗಾರಿಯನ್ನು ಶೀಘ್ರ ಕೈಗೆತ್ತಿಕೊಳ್ಳುವಂತೆ ಮನವಿ ಮಾಡಿದ್ದಾರೆ.

ಇದೇ ವೇಳೆ ₹187 ಕೋಟಿ ವೆಚ್ಚದ ಜಾಲವಾಡಗಿ ಏತ ನೀರಾವರಿ ಯೋಜನೆ ಈ ಭಾಗದ ರೈತರಿಗೆ ವರದಾನವಾಗಲಿದ್ದು, ಯೋಜನೆ ಅನುಷ್ಠಾನಕ್ಕೆ ಅಂದಿನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಸಚಿವರಾಗಿದ್ದ ಸಿ.ಸಿ. ಪಾಟೀಲ್, ಶಾಸಕರಾಗಿದ್ದ ಕಳಕಪ್ಪ ಬಂಡಿ ಹಾಗೂ ಮಾಜಿ ಸಂಸದ ಶಿವಕುಮಾರ ಉದಾಸಿ ಅವರು ಸಾಕಷ್ಟು ಶ್ರಮಿಸಿದ್ದರು ಎಂದು ಸ್ಮರಿಸಿದ್ದಾರೆ. ಯೋಜನೆಗೆ ಅನುದಾನ ಬಿಡುಗಡೆಯಾಗಿದ್ದರೂ ಕಾಮಗಾರಿಗೆ ಚಾಲನೆ ದೊರೆತಿರಲಿಲ್ಲ. ಇದೀಗ ಕಾಮಗಾರಿ ಆರಂಭವಾಗಿರುವುದು ರೈತಾಪಿ ವಲಯದಲ್ಲಿ ಹೊಸ ಆಶಾಭಾವನೆ ಮೂಡಿಸಿದೆ ಎಂದು ತಿಳಿಸಿದ್ದಾರೆ.

ಜಾಲವಾಡಗಿ ಏತ ನೀರಾವರಿ ಯೋಜನೆಯಡಿ ಗದಗ ವಿಧಾನಸಭಾ ಕ್ಷೇತ್ರದ 17 ಪ್ರಮುಖ ಕೆರೆಗಳ ಜೊತೆಗೆ ರೋಣ ಮತ್ತು ಶಿರಹಟ್ಟಿ ಕ್ಷೇತ್ರಗಳ ಕೆರೆಗಳನ್ನು ತುಂಬಿಸುವ ಯೋಜನೆ ರೂಪಿಸಲಾಗಿದ್ದು, ಇದರಿಂದ ಅಂತರ್ಜಲ ಮಟ್ಟ ಹೆಚ್ಚಳವಾಗಿ ಕೃಷಿ ಚಟುವಟಿಕೆಗಳಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಹೇಳಿದ್ದಾರೆ.

ಗದಗ-ಬೆಟಗೇರಿ ಅವಳಿ ನಗರದ ಬಾಕಿ ಉಳಿದಿರುವ ವರ್ತುಲ ರಸ್ತೆ ನಿರ್ಮಾಣಕ್ಕೂ ತಕ್ಷಣ ಮರುಚಾಲನೆ ನೀಡುವಂತೆ ಸರ್ಕಾರವನ್ನು ಅವರು ಒತ್ತಾಯಿಸಿದ್ದಾರೆ. ಸಂಸದ ಬಸವರಾಜ್ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ₹473 ಕೋಟಿ ವೆಚ್ಚದ ವರ್ತುಲ ರಸ್ತೆ ಯೋಜನೆಗೆ ಸಚಿವ ಸಂಪುಟ ಹಾಗೂ ಹಣಕಾಸು ಇಲಾಖೆಯ ಅನುಮೋದನೆ ದೊರೆತಿದ್ದರೂ, ನಂತರದ ದಿನಗಳಲ್ಲಿ ಯೋಜನೆ ನೆನೆಗುದಿಗೆ ಬಿದ್ದಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇದಲ್ಲದೆ, ಹಳೆ ಕೋರ್ಟ್ ಹಾಗೂ ಜೆ.ಟಿ. ಕಾಲೇಜು ಸಮೀಪದ ರೈಲ್ವೆ ಅಂಡರ್‌ಪಾಸ್‌ಗಳನ್ನು ಓವರ್‌ಬ್ರಿಡ್ಜ್‌ಗಳಾಗಿ ಮೇಲ್ದರ್ಜೆಗೇರಿಸುವ ಪ್ರಸ್ತಾವನೆ ಈಗಾಗಲೇ ಆಯ್ಕೆಯಾಗಿದ್ದು, ಅಗತ್ಯ ಅನುದಾನ ಬಿಡುಗಡೆಗೊಳಿಸಿ ಕಾಮಗಾರಿಗಳನ್ನು ಶೀಘ್ರ ಆರಂಭಿಸಲು ಸಂಸದ ಬಸವರಾಜ್ ಬೊಮ್ಮಾಯಿ ಮುಂದಾಗಬೇಕು ಎಂದು ಅನಿಲ ಮೆಣಸಿನಕಾಯಿ ಮನವಿ ಮಾಡಿದ್ದಾರೆ. ಈ ಕಾಮಗಾರಿಗಳು ಪೂರ್ಣಗೊಂಡರೆ ವಾಹನ ಸಂಚಾರ ದಟ್ಟಣೆ ಕಡಿಮೆಯಾಗುವುದರ ಜೊತೆಗೆ ಮಳೆಗಾಲದಲ್ಲಿ ಅಂಡರ್‌ಪಾಸ್‌ಗಳಲ್ಲಿ ನೀರು ನಿಲ್ಲುವ ಸಮಸ್ಯೆಗೂ ಶಾಶ್ವತ ಪರಿಹಾರ ದೊರೆಯಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

“ಕುಡಿಯುವ ನೀರು, ನೀರಾವರಿ ಹಾಗೂ ರಸ್ತೆ ಅಭಿವೃದ್ಧಿ ಯೋಜನೆಗಳು ಗದಗ-ಬೆಟಗೇರಿ ಭಾಗದ ಭವಿಷ್ಯ ರೂಪಿಸಲಿವೆ. ಈಗಾಗಲೇ ಅನುಮೋದನೆಗೊಂಡಿರುವ ವರ್ತುಲ ರಸ್ತೆ ಸೇರಿದಂತೆ ಬಾಕಿ ಉಳಿದಿರುವ ಎಲ್ಲ ಕಾಮಗಾರಿಗಳಿಗೆ ಸರ್ಕಾರ ತಕ್ಷಣ ಮರುಚಾಲನೆ ನೀಡಬೇಕು”

ಅನಿಲ್ ಮೆಣಸಿನಕಾಯಿ, ಬಿಜೆಪಿ ಮುಖಂಡ

ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಬೇಕು: ಎಚ್.ಪಿ. ಸಂದೇಶ

0

ವಿಜಯಸಾಕ್ಷಿ ಸುದ್ದಿ, ಧಾರವಾಡ: ದೇಶದ ಪ್ರತಿಯೊಬ್ಬ ನಾಗರಿಕನಿಗೂ ಸಾಮಾಜಿಕ ನ್ಯಾಯ ದೊರಕಿಸುವಲ್ಲಿ ಕಾನೂನು ಸೇವೆಯ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ನ್ಯಾಯಾಂಗ ವ್ಯವಸ್ಥೆಯ ಮೇಲಿನ ಜನರ ವಿಶ್ವಾಸವನ್ನು ಉಳಿಸುವ ಜವಾಬ್ದಾರಿ ವಕೀಲರ ಮೇಲಿದೆ ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಹಾಗೂ ಆಡಳಿತ ನ್ಯಾಯಾಧೀಶ ಎಚ್.ಪಿ. ಸಂದೇಶ ಹೇಳಿದರು.

ಕೃಷಿ ನಗರದ ಕೃಷಿ ವಿಶ್ವವಿದ್ಯಾಲಯದ ರೈತ ಜ್ಞಾನ ಕೇಂದ್ರ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ, ಹುಬ್ಬಳ್ಳಿಯ ಕಾನೂನು ಕಾಲೇಜು ಹಾಗೂ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಆಯೋಜಿಸಿದ್ದ ‘ಧಾರವಾಡ ತರಗತಿಯಿಂದ ನ್ಯಾಯಾಲಯದ ಕೋಣೆಗೆ-4ನೇ ವಲಯ ಕಾರ್ಯಾಗಾರ’ ಉದ್ಘಾಟಿಸಿ ಅವರು ಮಾತನಾಡಿದರು.

ನ್ಯಾಯದ ಮೇಲೆ ವಿಶ್ವಾಸವಿಟ್ಟು ನ್ಯಾಯಾಲಯದ ಮೆಟ್ಟಿಲೇರಿದ ಕಕ್ಷಿದಾರರಿಗೆ ನ್ಯಾಯ ದೊರಕಿಸುವುದು ವಕೀಲರ ಕರ್ತವ್ಯವಾಗಿದೆ. ಭವಿಷ್ಯದಲ್ಲಿ ವಕೀಲರಾಗಲಿರುವ ಕಾನೂನು ವಿದ್ಯಾರ್ಥಿಗಳು ಅನ್ಯಾಯಕ್ಕೊಳಗಾದವರ ಧ್ವನಿಯಾಗಿ ಕಾರ್ಯನಿರ್ವಹಿಸಬೇಕು. ಇಲ್ಲವಾದರೆ ಕಪ್ಪು ಕೋಟ್ ಧರಿಸುವುದಕ್ಕೆ ಅರ್ಥವಿಲ್ಲ ಎಂದು ಅವರು ಹೇಳಿದರು.

ಎಲ್‌ಎಲ್‌ಬಿ ವಿದ್ಯಾರ್ಥಿಗಳು ಶಿಸ್ತು, ಶ್ರಮ, ಸಮಯಪ್ರಜ್ಞೆ, ಆತ್ಮವಿಶ್ವಾಸ ಹಾಗೂ ನಿರ್ಭೀತಿಯನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು. ನೊಂದವರು, ವಿಧವೆಯರು ಹಾಗೂ ಶೋಷಣೆಗೆ ಒಳಗಾದವರ ಹಕ್ಕುಗಳ ರಕ್ಷಣೆಗೆ ಮುಂದಾಗಬೇಕು ಎಂದು ಕರೆ ನೀಡಿದರು.

ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಉಪಕುಲಪತಿ ಪ್ರೊ. ಸಿ. ಬಸವರಾಜು ಮಾತನಾಡಿ, ಮುಂದಿನ ದಿನಗಳಲ್ಲಿ ವಕೀಲರು ಮತ್ತು ಕಾನೂನು ತಜ್ಞರಾಗಿ ಸಮಾಜಕ್ಕೆ ಉತ್ತಮ ಸೇವೆ ಸಲ್ಲಿಸುವ ಗುರಿ ಹೊಂದಬೇಕು. ಜಾತಿ, ಧರ್ಮ, ಲಿಂಗ ಭೇದವಿಲ್ಲದೆ ಪ್ರತಿಯೊಬ್ಬರಿಗೂ ಸಮಾನ ನ್ಯಾಯ ದೊರೆಯಬೇಕು. ಕಾನೂನು ಜಾಗೃತಿಯ ಮೂಲಕ ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆ ತರಲು ಸಾಧ್ಯ ಎಂದು ಹೇಳಿದರು.

ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಎಸ್. ಸುನಿಲ್ ದತ್ ಯಾದವ್ ಮಾತನಾಡಿ, ಸಾರ್ವಜನಿಕ ಸೇವಕರು ಕಾನೂನಿನ ಅರಿವು ಹೊಂದಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಕಾಪಾಡಬೇಕು. ಭವಿಷ್ಯದ ವಕೀಲರು ಸಮಾಜದ ಸಮಸ್ಯೆಗಳ ಬಗ್ಗೆ ಜಾಗೃತರಾಗಿದ್ದು, ಕಕ್ಷಿದಾರರಿಗೆ ಹೈಕೋರ್ಟ್‌ನ ನ್ಯಾಯ ದೊರಕಿಸುವಲ್ಲಿ ಪ್ರಮುಖ ಪಾತ್ರ ವಹಿಸಬೇಕು ಎಂದು ಹೇಳಿದರು.

ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷೆ ಅನು ಶಿವರಾಮನ್ ಮಾತನಾಡಿ, ಕಾನೂನು ಹಾಗೂ ಸಾರ್ವಜನಿಕ ಸೇವೆಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ. ಕಾನೂನು ಅರಿವಿನ ಮೂಲಕ ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆ ತರಲು ಸಾಧ್ಯ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಹಾಗೂ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ನೇರಳೆ ವೀರಭದ್ರಯ್ಯ ವಿಜಯ್, ಸದಸ್ಯ ಕಾರ್ಯದರ್ಶಿ ಎಚ್. ಶಶಿಧರ, ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಪಿ.ಯು. ಕೃಷ್ಣರಾಜ್, ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅಲ್ಲಪ್ಪ ಎಂ. ಬಡಿಗೇರ, ನಾಲ್ಕನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಪೂರ್ಣಿಮಾ ಪೈ, ವಕೀಲರು, ಕಾನೂನು ವಿದ್ಯಾರ್ಥಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.

ನೇರಳೆ ವೀರಭದ್ರಯ್ಯ ವಿಜಯ್ ಸ್ವಾಗತಿಸಿದರು. ಪೂರ್ಣಿಮಾ ಪೈ ಕಾರ್ಯಕ್ರಮ ನಿರೂಪಿಸಿದರು. ಅಲ್ಲಪ್ಪ ಎಂ. ಬಡಿಗೇರ ವಂದಿಸಿದರು.

“ಅನ್ಯಾಯಕ್ಕೊಳಗಾದವರ ಪರವಾಗಿ ನಿಲ್ಲದಿದ್ದರೆ ಕಪ್ಪು ಕೋಟ್ ಧರಿಸುವುದಕ್ಕೆ ಅರ್ಥವಿಲ್ಲ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ದೊರಕಿಸುವುದು ಕಾನೂನು ವಿದ್ಯಾರ್ಥಿಗಳು ಮತ್ತು ವಕೀಲರ ಮೊದಲ ಕರ್ತವ್ಯವಾಗಬೇಕು”

ಎಚ್.ಪಿ. ಸಂದೇಶ, ನ್ಯಾಯಮೂರ್ತಿಗಳು

ಸಚಿವ ಸ್ಥಾನಕ್ಕಾಗಿ ಜಿ.ಎಸ್. ಪಾಟೀಲ ಪರ ಯುವಕರ ಗುಡುಗು: ಹೈಕಮಾಂಡ್‌ಗೆ ಎಚ್ಚರಿಕೆ

0

ವಿಜಯಸಾಕ್ಷಿ ಸುದ್ದಿ, ಡಂಬಳ: ರೋಣ ವಿಧಾನಸಭಾ ಕ್ಷೇತ್ರದ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಜಿ.ಎಸ್. ಪಾಟೀಲ ಅವರು ಗದಗ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವುದರ ಜೊತೆಗೆ ಕ್ಷೇತ್ರದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ್ದಾರೆ. ಇಂತಹ ಜನಪರ ನಾಯಕರಿಗೆ ಸಚಿವ ಸ್ಥಾನ ನೀಡಬೇಕು. ಇಲ್ಲದಿದ್ದರೆ ಕಾಂಗ್ರೆಸ್ ಯುವಕರ ನೇತೃತ್ವದಲ್ಲಿ ದೊಡ್ಡ ಪ್ರಮಾಣದ ಹೋರಾಟ ನಡೆಸಲಾಗುವುದು ಎಂದು ಯುವ ಕಾಂಗ್ರೆಸ್ ಮುಖಂಡ ವೆಂಕಟೇಶ ಗದಗಿನ ಎಚ್ಚರಿಸಿದರು.

ಡಂಬಳದ ಐತಿಹಾಸಿಕ ಪ್ರವಾಸಿ ಮಂದಿರದಲ್ಲಿ ಯುವ ಕಾಂಗ್ರೆಸ್ ವತಿಯಿಂದ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಂಗಟಾಲೂರು ಏತ ನೀರಾವರಿ ಯೋಜನೆಯ ಮೂಲಕ ಕೆರೆಗಳನ್ನು ತುಂಬಿಸಿ ರೈತರ ಬದುಕಿಗೆ ಆಶಾಕಿರಣವಾಗಿರುವ ಜಿ.ಎಸ್. ಪಾಟೀಲರು ಕ್ಷೇತ್ರದ ಅಭಿವೃದ್ಧಿಗೆ ನಿರಂತರ ಶ್ರಮಿಸಿದ್ದಾರೆ. ಡಂಬಳದಲ್ಲಿ ತೋಟಗಾರಿಕಾ ಕಾಲೇಜು ಸ್ಥಾಪನೆ ಸೇರಿದಂತೆ ಹಲವಾರು ಅಭಿವೃದ್ಧಿ ಕಾರ್ಯಗಳಿಗೆ ಮುಂಚೂಣಿಯಲ್ಲಿದ್ದಾರೆ. ಆದ್ದರಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಜಿ.ಎಸ್. ಪಾಟೀಲರಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು.

ಯುವ ಕಾಂಗ್ರೆಸ್ ಮುಖಂಡ ಪ್ರಕಾಶ ಮೇಗೂರ ಮಾತನಾಡಿ, ರೋಣಕ್ಕೆ ಭೇಟಿ ನೀಡಿದ್ದ ವೇಳೆ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ ಅವರು ಜಿ.ಎಸ್. ಪಾಟೀಲರು ಸಚಿವ ಸ್ಥಾನಕ್ಕೆ ಅರ್ಹರು ಎಂದು ಹೇಳಿದ್ದರು. ಆ ಭರವಸೆಯನ್ನು ಇದೀಗ ಈಡೇರಿಸುವ ಸಮಯ ಬಂದಿದೆ. ರೈತರು, ಬಡವರು ಹಾಗೂ ಕಾರ್ಮಿಕರ ಪರವಾಗಿ ನಿರಂತರವಾಗಿ ಕೆಲಸ ಮಾಡಿದ ನಾಯಕನಿಗೆ ಸಚಿವ ಸ್ಥಾನ ನೀಡುವುದರಿಂದ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ಮೂಡಲಿದೆ ಎಂದು ಹೇಳಿದರು.

ಜಿ.ಎಸ್. ಪಾಟೀಲರಿಗೆ ಸಚಿವ ಸ್ಥಾನ ನೀಡದಿದ್ದರೆ ಕಾಂಗ್ರೆಸ್ ಪಕ್ಷದ ಅನೇಕ ಯುವ ಕಾರ್ಯಕರ್ತರು ರಾಜೀನಾಮೆ ನೀಡುವ ಪರಿಸ್ಥಿತಿ ನಿರ್ಮಾಣವಾಗಬಹುದು ಎಂದು ಎಚ್ಚರಿಸಿದ ಅವರು, ಮುಂಬರುವ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಗಳ ದೃಷ್ಟಿಯಿಂದಲೂ ಅವರಿಗೆ ಸಚಿವ ಸ್ಥಾನ ನೀಡುವುದು ಅಗತ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.

ಯುವ ಕಾಂಗ್ರೆಸ್ ಸದಸ್ಯರಾದ ಆದಿತ್ಯ ಗದಗಿನ ಹಾಗೂ ಆಶಿಫ್ ತಾಂಬೋಟಿ ಮಾತನಾಡಿ, ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಜಿ.ಎಸ್. ಪಾಟೀಲರು ಯಾವುದೇ ಕಪ್ಪು ಚುಕ್ಕೆ ಇಲ್ಲದ ರಾಜಕೀಯ ಜೀವನ ನಡೆಸಿದ್ದಾರೆ. ಕೋವಿಡ್ ಅವಧಿಯಲ್ಲಿ ಜನರ ಸಂಕಷ್ಟಕ್ಕೆ ಸ್ಪಂದಿಸಿದ ಮಾನವೀಯ ನಾಯಕನಾಗಿ ಗುರುತಿಸಿಕೊಂಡಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಅವರ ಸೇವೆಯನ್ನು ಪರಿಗಣಿಸಿ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿದರು.

ಯುವ ಮುಖಂಡ ಗೋಪಾಲ ಗದಗಿನ ಮಾತನಾಡಿ, 25 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿರುವುದು ಜಿ.ಎಸ್. ಪಾಟೀಲರ ಜನಪ್ರಿಯತೆಗೆ ಸಾಕ್ಷಿಯಾಗಿದೆ. ಈ ಹಿಂದೆ ನೀಡಿದ್ದ ಭರವಸೆಯಂತೆ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಯುವ ಮುಖಂಡರಾದ ಭರಮಪ್ಪ ಮಂಗೋಜಿ, ಬುಡ್ನೇಸಾಬ ಜಲಾಲನವರ, ಮಂಜುನಾಥ ನರಗುಂದ, ಯಾಸೀನ್ ತಾಂಬೋಟಿ, ಶ್ರೀಕಾಂತ ಸಿರಿಗೇರಿ, ಮನ್ಸೂರಅಲಿ ಸುಂಕದ ಸೇರಿದಂತೆ ಹಲವರು ಉಪಸ್ಥಿತರಿದ್ದರು.

“ರೈತರು, ಬಡವರು ಮತ್ತು ಸಾಮಾನ್ಯ ಜನರ ಪರವಾಗಿ ನಿರಂತರವಾಗಿ ಹೋರಾಟ ನಡೆಸಿರುವ ಜಿ.ಎಸ್. ಪಾಟೀಲರಿಗೆ ಸಚಿವ ಸ್ಥಾನ ನೀಡುವುದು ಕಾಂಗ್ರೆಸ್ ಹೈಕಮಾಂಡ್‌ನ ನೈತಿಕ ಹೊಣೆಗಾರಿಕೆಯಾಗಿದೆ. ಸಚಿವ ಸ್ಥಾನ ನೀಡದಿದ್ದರೆ ಯುವ ಕಾಂಗ್ರೆಸ್ ನೇತೃತ್ವದಲ್ಲಿ ಹೋರಾಟ ತೀವ್ರಗೊಳಿಸಲಾಗುವುದು.”

ವೆಂಕಟೇಶ ಗದಗಿನ
ಯುವ ಕಾಂಗ್ರೆಸ್ ಮುಖಂಡರು

30 ವರ್ಷಗಳ ಬಳಿಕ ಗುರು-ಶಿಷ್ಯರ ಅಪೂರ್ವ ಸಂಗಮ: ಪಾದಪೂಜೆ ಸಲ್ಲಿಸಿ ಆಶೀರ್ವಾದ ಪಡೆದ ವಿದ್ಯಾರ್ಥಿಗಳು

0

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಮೂರು ದಶಕಗಳ ಬಳಿಕ ಒಂದೇ ವೇದಿಕೆಯಲ್ಲಿ ಸೇರಿದ್ದ ಹಳೆಯ ವಿದ್ಯಾರ್ಥಿಗಳು ತಮ್ಮ ಗುರುಗಳಿಗೆ ಪಾದಪೂಜೆ ಸಲ್ಲಿಸಿ ಆಶೀರ್ವಾದ ಪಡೆದ ಅಪರೂಪದ ದೃಶ್ಯ ನರೇಗಲ್ಲದಲ್ಲಿ ಕಂಡು ಬಂತು. ಗುರುಗಳ ಮೇಲಿನ ಗೌರವ, ಹಳೆಯ ಸ್ನೇಹಿತರ ಮಿಲನ ಹಾಗೂ ಶಾಲಾ ದಿನಗಳ ಸಿಹಿ ನೆನಪುಗಳ ಸಂಭ್ರಮದಿಂದ ‘ಗುರುವಂದನಾ ಮತ್ತು ಸ್ನೇಹ ಸಮ್ಮಿಲನ’ ಕಾರ್ಯಕ್ರಮ ಭಾವನಾತ್ಮಕ ಕ್ಷಣಗಳಿಗೆ ಸಾಕ್ಷಿಯಾಯಿತು.

ನರೇಗಲ್ಲದ ಸರ್ಕಾರಿ ಮಾದರಿ ಕೇಂದ್ರ ಕನ್ನಡ ಗಂಡು ಮಕ್ಕಳ ಶಾಲೆಯಲ್ಲಿ 1988-89ರಿಂದ 1995-96ರ ಬ್ಯಾಚ್‌ನ ಹಳೆಯ ವಿದ್ಯಾರ್ಥಿಗಳು ಈ ಕಾರ್ಯಕ್ರಮವನ್ನು ಆಯೋಜಿಸಿದ್ದರು.

ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ನಿವೃತ್ತ ಶಿಕ್ಷಕ ಎಂ.ಎಸ್. ಧಡೇಸೂರಮಠ, ಗುರುಗಳ ಮಹತ್ವವನ್ನು ಸ್ಮರಿಸಿ ಭಾವಪೂರ್ಣವಾಗಿ ಮಾತನಾಡಿದರು.

“ತಂದೆ-ತಾಯಿಯ ನಂತರ ಜೀವನಕ್ಕೆ ದಾರಿ ತೋರಿಸುವವರು ಗುರುಗಳು. ಗುರುವಿನ ಗುಲಾಮನಾಗುವ ತನಕ ಮುಕ್ತಿ ಸಿಗುವುದಿಲ್ಲ. ಇಂದು ನಾವು ಸಮಾಜದಲ್ಲಿ ಒಂದು ಸ್ಥಾನ ಪಡೆದಿದ್ದರೆ ಅದಕ್ಕೆ ಗುರುಗಳ ಮಾರ್ಗದರ್ಶನ, ಶಿಸ್ತು ಹಾಗೂ ಅವರು ಬಿತ್ತಿದ ಮೌಲ್ಯಗಳೇ ಕಾರಣ.” ಎಂದು ಎಂ.ಎಸ್. ಧಡೇಸೂರಮಠ ಹೇಳಿದರು.

ವಿದ್ಯಾರ್ಥಿಗಳು ಪುಸ್ತಕ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಪುಸ್ತಕಗಳು ಜ್ಞಾನವನ್ನು ವೃದ್ಧಿಸುವುದರ ಜೊತೆಗೆ ವ್ಯಕ್ತಿತ್ವ ವಿಕಸನಕ್ಕೂ ಸಹಕಾರಿಯಾಗುತ್ತವೆ ಎಂದು ಅವರು ಹೇಳಿದರು.

ಇಂದಿನ ಮೊಬೈಲ್ ಯುಗದಲ್ಲೂ ಓದುವ ಸಂಸ್ಕೃತಿ ಕಡಿಮೆಯಾಗಬಾರದು. ಪ್ರತಿಯೊಂದು ಮನೆಯಲ್ಲಿ ಪತ್ರಿಕೆ ಓದುವ ಅಭ್ಯಾಸ ಬೆಳೆಸಿಕೊಳ್ಳಬೇಕು. ಪತ್ರಿಕೆ ಸಮಾಜದ ಕನ್ನಡಿಯಾಗಿದ್ದು, ದೇಶ-ವಿದೇಶದ ವಿದ್ಯಮಾನಗಳ ಜೊತೆಗೆ ಕೃಷಿ, ಆರೋಗ್ಯ ಹಾಗೂ ವಿಜ್ಞಾನದ ಮಾಹಿತಿಯನ್ನು ಒದಗಿಸುತ್ತದೆ ಎಂದು ತಿಳಿಸಿದರು.

ಅಲ್ಲದೆ, ಯುವಜನತೆ ಗುಟ್ಕಾ, ತಂಬಾಕು ಸೇರಿದಂತೆ ದುಶ್ಚಟಗಳಿಂದ ದೂರವಿದ್ದು ಆರೋಗ್ಯಕರ ಜೀವನ ನಡೆಸಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ನಿವೃತ್ತ ಡಿಡಿಪಿಐ ಸಂಜೀವ ಬಿಂಗೇರಿ ಮಾತನಾಡುವ ವೇಳೆ ಭಾವುಕರಾದರು.

ಅವರ ಮಾತುಗಳಿಗೆ ಸಭಾಂಗಣ ಕರತಾಡನದಿಂದ ಮೊಳಗಿತು.

ಈ ಸಂದರ್ಭದಲ್ಲಿ ನಿವೃತ್ತ ಶಿಕ್ಷಕರಾದ ವೀರಪ್ಪ ಸಂಗನಾಳ, ಕುಸುಮವ್ವ ಭೀಮನಗೌಡ್ರ, ಶರಣಬಸಪ್ಪ ಬೂದಿಹಾಳ, ಅಂದಾನಪ್ಪ ಅಣಗೌಡ್ರ, ಎಂ.ಪಿ. ಬಸರೀಗಿಡದ, ನಿಂಗನಗೌಡ ಚಿಕ್ಕನಗೌಡ್ರ, ಬಸವನಗೌಡ ಗೌಡರ, ಗೀತಾ ಗುಜ್ಜಲ ಹಾಗೂ ಮಲ್ಲವ್ವ ಸಕ್ರೋಜಿ ಅವರನ್ನು ‘ಜ್ಞಾನ ದೀಪಗಳು’ ಎಂದು ಗೌರವಿಸಿ ಶಾಲು ಹೊದಿಸಿ, ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು.

ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿ ಕೃಷಿಕರಾಗಿರುವ ಹಳೆಯ ವಿದ್ಯಾರ್ಥಿಗಳು ಸಿಂಗರಿಸಿದ ಜೋಡಿ ಎತ್ತುಗಳನ್ನು ಕರೆತಂದು ಕೃಷಿ ಸಂಸ್ಕೃತಿಯ ಮಹತ್ವವನ್ನು ಬಿಂಬಿಸಿದರು. ಬಳಿಕ ಗುರುಗಳಿಗೆ ಪುಷ್ಪವೃಷ್ಟಿ ಮಾಡಿ, ಪಾದಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು. ಈ ದೃಶ್ಯ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿತ್ತು.

ಹಳೆಯ ವಿದ್ಯಾರ್ಥಿಗಳಾದ ವಿರೂಪಾಕ್ಷಪ್ಪ ಸಂಗನಾಳ, ಹುಚ್ಚಪ್ಪ ನರೇಗಲ್ಲ, ವರುಣ ಸಂಗನಾಳ ಹಾಗೂ ಕಾಳಿದಾಸ ಬಡಿಗೇರ ಅವರು ಶಾಲಾ ದಿನಗಳ ನೆನಪುಗಳನ್ನು ಹಂಚಿಕೊಂಡು ಹಳೆಯ ದಿನಗಳನ್ನು ಮರುಕಳಿಸಿದರು.

ಹರೀಶ ಬೊಮ್ಮನಹಳ್ಳಿ ಹಾಗೂ ಗೀತಾ ಭೋಪಳಾಪೂರ ಅವರ ಸಂಗೀತ ಕಾರ್ಯಕ್ರಮಕ್ಕೆ ಮೆರುಗು ನೀಡಿತು.

ಶಿವಕುಮಾರ ಮುಳಗುಂದ ಪ್ರಾಸ್ತಾವಿಕವಾಗಿ ಮಾತನಾಡಿದರು. ವೀರಪ್ಪ ಸಂಗನಾಳ ಸ್ವಾಗತಿಸಿದರು. ಸುರೇಶ ಹಳ್ಳಿಕೇರಿ, ಗವಿಸಿದ್ದಯ್ಯ ಹಳ್ಳಿಕೇರಿ ಸೇರಿದಂತೆ ಅನೇಕ ಗಣ್ಯರು ಹಾಗೂ ಹಳೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

“ಮೂವತ್ತು ವರ್ಷಗಳ ಹಿಂದೆ ಮಾಡಿದ ಸೇವೆಯನ್ನು ವಿದ್ಯಾರ್ಥಿಗಳು ಇಂದಿಗೂ ನೆನಪಿಟ್ಟುಕೊಂಡು ಗೌರವಿಸುತ್ತಿರುವುದು ಶಿಕ್ಷಕನ ಜೀವನದ ಅತ್ಯಂತ ದೊಡ್ಡ ಸಂಪತ್ತು. ಇದಕ್ಕಿಂತ ದೊಡ್ಡ ಪ್ರಶಸ್ತಿ ಮತ್ತೊಂದಿಲ್ಲ.”

ಸಂಜೀವ ಬಿಂಗೇರಿ, ನಿವೃತ್ತ ಡಿಡಿಪಿಐ

ಒತ್ತಡ, ರೋಗಗಳಿಗೆ ಯೋಗವೇ ರಾಮಬಾಣ: ಡಾ. ಜುಬೇದಾ ತಿಗಳೇರ

0

ವಿಜಯಸಾಕ್ಷಿ ಸುದ್ದಿ, ಗದಗ: ಇಂದಿನ ವೇಗದ ಬದುಕಿನಲ್ಲಿ ಹೆಚ್ಚುತ್ತಿರುವ ಒತ್ತಡ, ಮಧುಮೇಹ, ರಕ್ತದೊತ್ತಡ ಸೇರಿದಂತೆ ವಿವಿಧ ಜೀವನಶೈಲಿ ಕಾಯಿಲೆಗಳಿಗೆ ಯೋಗವೇ ಪರಿಣಾಮಕಾರಿ ಪರಿಹಾರ ಎಂದು ಜಿಲ್ಲಾ ಆಯುಷ್ಯ ಅಧಿಕಾರಿ ಡಾ. ಜುಬೇದಾ ತಿಗಳೇರ ಹೇಳಿದರು.

ಈಶ್ವರೀಯ ವಿಶ್ವ ವಿದ್ಯಾಲಯ ಹಾಗೂ ಆಯುಷ್ಯ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಆರಂಭಗೊಂಡ ಯೋಗ ಮತ್ತು ಯೋಗಾಸನ ಶಿಬಿರವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

“ಈಶ್ವರೀಯ ವಿಶ್ವ ವಿದ್ಯಾಲಯದ ಆವರಣಕ್ಕೆ ಕಾಲಿಟ್ಟ ಕ್ಷಣದಿಂದಲೇ ಪ್ರಶಾಂತ ವಾತಾವರಣ ಅನುಭವವಾಗುತ್ತದೆ. ಇಂತಹ ಶಾಂತ ವಾತಾವರಣದಲ್ಲಿ ಯೋಗಾಸನ, ಪ್ರಾಣಾಯಾಮ ಮತ್ತು ಧ್ಯಾನ ಅಭ್ಯಾಸ ಮಾಡುವುದರಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃದ್ಧಿಯಾಗುತ್ತದೆ. ಸಮಾಜದಲ್ಲಿ ದಿನದಿಂದ ದಿನಕ್ಕೆ ಒತ್ತಡ, ಬಿಪಿ, ಶುಗರ್ ಹಾಗೂ ಇತರೆ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಇಂತಹ ಸಂದರ್ಭದಲ್ಲಿ ಯೋಗದ ಮಹತ್ವವನ್ನು ಜನರಿಗೆ ತಲುಪಿಸುವ ಕಾರ್ಯ ಅತ್ಯಂತ ಶ್ಲಾಘನೀಯ” ಎಂದು ಅವರು ಹೇಳಿದರು.

ರಾಜಯೋಗಿನಿ ಬ್ರಹ್ಮಾಕುಮಾರಿ ಜಯಂತಿ ಅಕ್ಕ ಮಾತನಾಡಿ, ಯೋಗವು ದಿವ್ಯ ಔಷಧಿಯಂತೆ ಕಾರ್ಯನಿರ್ವಹಿಸುತ್ತದೆ. ಗದಗದ ಜನತೆ ಆರೋಗ್ಯವಂತರಾಗಿ, ಒತ್ತಡಮುಕ್ತವಾಗಿ, ಪ್ರೀತಿ, ಸ್ನೇಹ ಮತ್ತು ಸೌಹಾರ್ದತೆಯಿಂದ ಬದುಕಬೇಕು ಎಂಬ ಉದ್ದೇಶದಿಂದ ಈ ಶಿಬಿರ ಆಯೋಜಿಸಲಾಗಿದೆ ಎಂದು ಹೇಳಿದರು.

ಬಸವೇಶ್ವರ ನಗರ, ಸಿದ್ಧರಾಮೇಶ್ವರ ನಗರ ಹಾಗೂ ಬೆಟಗೇರಿ ಹೊಸಪೇಟೆ ಚೆಕ್‌ಪೋಸ್ಟ್‌ನಲ್ಲಿರುವ ಈಶ್ವರೀಯ ವಿಶ್ವ ವಿದ್ಯಾಲಯದ ಸಭಾಂಗಣದಲ್ಲಿ ಜೂನ್ 30ರವರೆಗೆ ಪ್ರತಿದಿನ ಬೆಳಿಗ್ಗೆ 6ರಿಂದ 7.30ರವರೆಗೆ ಉಚಿತವಾಗಿ ಯೋಗ ಮತ್ತು ಯೋಗಾಸನ ತರಬೇತಿ ನಡೆಯಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕರೆ ನೀಡಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಗುತ್ತಿಗೆದಾರ ಆಂಜನೇಯ ಕಟಗಿ ಮಾತನಾಡಿ, ಸಿದ್ಧರಾಮೇಶ್ವರ ನಗರದಲ್ಲಿ ಈಶ್ವರೀಯ ವಿಶ್ವ ವಿದ್ಯಾಲಯ ನಿರಂತರವಾಗಿ ನಡೆಸುತ್ತಿರುವ ಸೇವಾ ಕಾರ್ಯಗಳಿಂದ ಸುತ್ತಮುತ್ತಲಿನ ಜನರ ಬದುಕು ಮತ್ತು ವರ್ತನೆಯಲ್ಲಿ ಗಮನಾರ್ಹ ಬದಲಾವಣೆ ಕಂಡುಬಂದಿದೆ ಎಂದು ಹೇಳಿದರು.

“ಬ್ರಹ್ಮಾಕುಮಾರಿಯರ ತ್ಯಾಗ, ತಪಸ್ಸು, ನಿಸ್ವಾರ್ಥ ಸೇವಾ ಮನೋಭಾವ ಮತ್ತು ಸದಾ ಮುಖದಲ್ಲಿರುವ ಮಂದಹಾಸ ಉತ್ತಮ ಸಮಾಜ ನಿರ್ಮಾಣಕ್ಕೆ ಪ್ರೇರಣೆಯಾಗಿದೆ. ಈ ಯೋಗ ಶಿಬಿರದಲ್ಲಿ ಮೊದಲು ನಾನು ಭಾಗವಹಿಸಿ, ಮತ್ತಷ್ಟು ಜನರನ್ನು ಭಾಗವಹಿಸುವಂತೆ ಪ್ರೇರೇಪಿಸುತ್ತೇನೆ” ಎಂದು ತಿಳಿಸಿದರು. ಇದೇ ವೇಳೆ ಹಿರಿಯ ರಾಜಕಾರಣಿ ಎಚ್.ಕೆ. ಪಾಟೀಲ ಅವರನ್ನು ಸ್ಮರಿಸಿದರು.

ಆಯುಷ್ಯ ಇಲಾಖೆ ನಿಯೋಜಿಸಿದ್ದ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಯೋಗ ಪರಿಣಿತರಾದ ನೀಲಾಂಬಿಕಾ ಚವುಡಿ ಹಾಗೂ ವಸಂತ ಹಲಗಿ ಅವರು ಆಸನ ಮತ್ತು ಪ್ರಾಣಾಯಾಮದ ಪ್ರಾತ್ಯಕ್ಷಿಕೆ ನಡೆಸಿಕೊಟ್ಟರು.

ಕಾರ್ಯಕ್ರಮವನ್ನು ಬಿ.ಕೆ. ಸಾವಿತ್ರಿ ನಿರೂಪಿಸಿದರು. ಬಿ.ಕೆ. ರೇಖಾ ವಂದಿಸಿದರು.

“ರೋಗಮುಕ್ತ, ಒತ್ತಡಮುಕ್ತ ಸಮಾಜ ನಿರ್ಮಾಣಕ್ಕೆ ಯೋಗವೇ ದಿವ್ಯ ಮಾರ್ಗ”

ಡಾ. ಜುಬೇದಾ ತಿಗಳೇರ

ಜಿಲ್ಲಾ ಆಯುಷ್ಯ ಅಧಿಕಾರಿ

ಸ್ಕೀಮ್ ಮಾಡುವಾಗ ಸರ್ಕಾರಕ್ಕೆ ದಕ್ಕೆ ಆಗಬಾರದು: ಬಿಡದಿ ಟೌನ್ ಶಿಪ್ ಕುರಿತು ಸತೀಶ್ ಜಾರಕಿಹೊಳಿ ಹೇಳಿದ್ದೇನು..?

ಬೆಂಗಳೂರು: ರಾಮನಗರ ಜಿಲ್ಲೆಯ ಬಿಡದಿಯಲ್ಲಿ ಯೋಜಿಸಲಾಗಿರುವ ಟೌನ್‌ಶಿಪ್ ಯೋಜನೆ ಕುರಿತು ಸಚಿವ ಸತೀಶ್ ಜಾರಕಿಹೊಳಿ ಪರೋಕ್ಷವಾಗಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಯಾವುದೇ ಯೋಜನೆ ಕೈಗೊಳ್ಳುವ ವೇಳೆ ಅದು ಸರ್ಕಾರಕ್ಕೆ ಆರ್ಥಿಕ ಹೊರೆ ಆಗಬಾರದು ಎಂದು ಅಭಿಪ್ರಾಯಪಟ್ಟಿದ್ದಾರೆ.

ನಗರದಲ್ಲಿ ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಡದಿ ಟೌನ್‌ಶಿಪ್ ಯೋಜನೆ ಕುರಿತು ಮುಂದಿನ ಕ್ಯಾಬಿನೆಟ್ ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದು ತಿಳಿಸಿದ್ದಾರೆ. ಪಕ್ಷದ ಭವಿಷ್ಯವೂ ಇಂತಹ ಯೋಜನೆಗಳ ಯಶಸ್ಸಿನ ಮೇಲೆ ಅವಲಂಬಿತವಾಗಿದೆ ಎಂದು ಅವರು ಹೇಳಿದರು.

“ಯಾವುದೋ ಒಂದು ಯೋಜನೆ ಮಾಡುತ್ತೇವೆ ಎಂದು ಸರ್ಕಾರಕ್ಕೆ ಹೊರೆ ಆಗಬಾರದು. ಅಂತಹ ಸಮಸ್ಯೆಗಳು ಉದ್ಭವವಾಗಬಾರದು,” ಎಂದು ಸತೀಶ್ ಜಾರಕಿಹೊಳಿ ಹೇಳಿದರು. ಶನಿವಾರ ನಡೆಯಲಿರುವ ಕ್ಯಾಬಿನೆಟ್ ಸಭೆಯಲ್ಲಿ ಈ ವಿಷಯವನ್ನು ಚರ್ಚಿಸಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಹೋರಾಟದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಅವರು ಏನು ಹೋರಾಟ ಮಾಡುತ್ತಾರೋ ಅದು ಅವರ ಪಕ್ಷದ ವಿಷಯ. ಆದರೆ ಅದು ಒಳ್ಳೆಯದಾಗಬೇಕು, ಕೆಟ್ಟ ಪರಿಣಾಮ ಬೀರಬಾರದು ಎಂದು ಹೇಳಿದರು.

ಬಿಡದಿ ಟೌನ್‌ಶಿಪ್ ಕುರಿತು ಪರ–ವಿರೋಧ ಅಭಿಪ್ರಾಯಗಳ ಕುರಿತು ಚರ್ಚೆ ಅಗತ್ಯವಿದೆ ಎಂದು ಹೇಳಿದ ಅವರು, ಪಕ್ಷದ ಹಿತದೃಷ್ಟಿಯಿಂದ ಸಮಗ್ರ ಪರಿಶೀಲನೆ ಅಗತ್ಯವಾಗಿದೆ ಎಂದು ತಿಳಿಸಿದ್ದಾರೆ.

ಇದಲ್ಲದೆ ಸಚಿವ ಸಂಪುಟ ವಿಸ್ತರಣೆ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಸಚಿವ ಜಮೀರ್ ಅಹ್ಮದ್ ಅವರಿಗೆ ಹೆಚ್ಚುವರಿ ಸ್ಥಾನ ನೀಡುವ ಕುರಿತು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಅವರ ಬಳಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದೇನೆ ಎಂದು ಹೇಳಿದರು.

ಮುಸ್ಲಿಂ ಸಮುದಾಯದ ಮತಬಲವನ್ನು ಗಮನದಲ್ಲಿಟ್ಟುಕೊಂಡು ಜಮೀರ್ ಅಹ್ಮದ್ ಹಾಗೂ ಮತ್ತೊಬ್ಬರಿಗೆ ಅವಕಾಶ ನೀಡಬೇಕು ಎಂದು ಮನವಿ ಮಾಡಿದ್ದಾಗಿ ಅವರು ತಿಳಿಸಿದ್ದಾರೆ. ಹಿಂದಿನ ಅವಧಿಯಲ್ಲಿ ಇಬ್ಬರಿಗೆ ಅವಕಾಶ ನೀಡಲಾಗಿತ್ತು, ಈ ಬಾರಿ ಮೂವರಿಗೆ ಅವಕಾಶ ನೀಡುವ ಕುರಿತು ಚರ್ಚೆ ನಡೆದಿದೆ ಎಂದು ಸತೀಶ್ ಜಾರಕಿಹೊಳಿ ಹೇಳಿದರು.

ಧರ್ಮಸ್ಥಳ ವಿರುದ್ಧದ ಷಡ್ಯಂತ್ರದ ಸಮಗ್ರ ತನಿಖೆ ಸಿಬಿಐಗೆ ವಹಿಸಿ: ಸಿಎಂಗೆ ಸಿ.ಟಿ. ರವಿ ಪತ್ರ

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ವಿರುದ್ಧ ನಡೆಯುತ್ತಿದೆ ಎನ್ನಲಾದ ಷಡ್ಯಂತ್ರದ ಆರೋಪಗಳ ಕುರಿತು ಸಮಗ್ರ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸಲು ಪ್ರಕರಣವನ್ನು ಕೇಂದ್ರ ತನಿಖಾ ದಳಕ್ಕೆ (ಸಿಬಿಐ) ವಹಿಸಬೇಕು ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಆಗ್ರಹಿಸಿದ್ದಾರೆ.

ಈ ಸಂಬಂಧ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಪತ್ರ ಬರೆದಿರುವ ಸಿ.ಟಿ. ರವಿ, ಧರ್ಮಸ್ಥಳದ ಕುರಿತು ಇತ್ತೀಚೆಗೆ ಬೆಳಕಿಗೆ ಬರುತ್ತಿರುವ ಬೆಳವಣಿಗೆಗಳು ಕೋಟ್ಯಂತರ ಭಕ್ತರ ಮನಸ್ಸಿನಲ್ಲಿ ಆತಂಕ ಮತ್ತು ಅನುಮಾನಗಳನ್ನು ಮೂಡಿಸಿವೆ ಎಂದು ತಿಳಿಸಿದ್ದಾರೆ.

ಧರ್ಮಸ್ಥಳವು ಕೇವಲ ಒಂದು ಧಾರ್ಮಿಕ ಕ್ಷೇತ್ರವಲ್ಲ, ಅದು ಕೋಟ್ಯಂತರ ಜನರ ನಂಬಿಕೆ, ಭಕ್ತಿ ಮತ್ತು ಧಾರ್ಮಿಕ ಭಾವನೆಗಳ ಕೇಂದ್ರವಾಗಿದೆ. ಶಿಕ್ಷಣ, ಆರೋಗ್ಯ, ಸಮಾಜಸೇವೆ ಹಾಗೂ ಅನ್ನದಾನದಂತಹ ಅನೇಕ ಕ್ಷೇತ್ರಗಳಲ್ಲಿ ಧರ್ಮಸ್ಥಳ ಸಲ್ಲಿಸಿರುವ ಸೇವೆ ರಾಷ್ಟ್ರಕ್ಕೆ ಮಾದರಿಯಾಗಿದೆ. ಇಂತಹ ಸಂಸ್ಥೆ ಹಾಗೂ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ವಿರುದ್ಧ ಹಲವು ವರ್ಷಗಳಿಂದ ನಿರಂತರ ಆರೋಪಗಳು ಮತ್ತು ಅಪಪ್ರಚಾರಗಳು ನಡೆಯುತ್ತಿವೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇತ್ತೀಚೆಗೆ ಹೈಕೋರ್ಟ್‌ಗೆ ಸಲ್ಲಿಕೆಯಾಗಿರುವ ಅರ್ಜಿಯಲ್ಲಿ ಕೆಲವು ಗಣ್ಯ ವ್ಯಕ್ತಿಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವವರ ಹೆಸರುಗಳು ಉಲ್ಲೇಖವಾಗಿದ್ದು, ಧರ್ಮಸ್ಥಳ ಮತ್ತು ಡಾ. ವೀರೇಂದ್ರ ಹೆಗ್ಗಡೆ ವಿರುದ್ಧ ಸುಮಾರು 200 ಕೋಟಿ ರೂಪಾಯಿ ವೆಚ್ಚದಲ್ಲಿ ಸಂಘಟಿತ ಷಡ್ಯಂತ್ರ ರೂಪಿಸಲಾಗಿದೆ ಎಂಬ ಗಂಭೀರ ಆರೋಪವೂ ಕೇಳಿಬಂದಿದೆ ಎಂದು ತಿಳಿಸಿದ್ದಾರೆ.

ಈ ಆರೋಪಗಳು ಸತ್ಯವೋ ಅಥವಾ ಸುಳ್ಳೋ ಎಂಬುದನ್ನು ತನಿಖೆಯೇ ನಿರ್ಧರಿಸಬೇಕು. ಆದರೆ ಧರ್ಮಸ್ಥಳದಂತಹ ಪ್ರತಿಷ್ಠಿತ ಸಂಸ್ಥೆಯ ವಿರುದ್ಧ ಇಷ್ಟೊಂದು ದೊಡ್ಡ ಮಟ್ಟದ ಅಭಿಯಾನ ನಡೆಸಲು ಹಣ ಎಲ್ಲಿಂದ ಬಂತು, ಅದರ ಹಿಂದೆ ಯಾರು ಇದ್ದರು ಹಾಗೂ ಯಾವುದೇ ದೊಡ್ಡ ಜಾಲ ಕಾರ್ಯನಿರ್ವಹಿಸುತ್ತಿತ್ತೇ ಎಂಬ ಸತ್ಯ ಹೊರಬರಬೇಕಾಗಿದೆ ಎಂದು ಒತ್ತಾಯಿಸಿದ್ದಾರೆ.

ಈ ಹಿಂದೆ ಧರ್ಮಸ್ಥಳದ ವಿರುದ್ಧ ವ್ಯವಸ್ಥಿತ ಷಡ್ಯಂತ್ರ ನಡೆಯುತ್ತಿರುವ ಅನುಮಾನ ವ್ಯಕ್ತಪಡಿಸಿದ್ದೆ. ಆಗ ಟೀಕೆಗಳು ವ್ಯಕ್ತವಾಗಿದ್ದವು. ಆದರೆ ಈಗ ಹೊರಬರುತ್ತಿರುವ ಮಾಹಿತಿಗಳನ್ನು ಗಮನಿಸಿದರೆ ಆ ಅನುಮಾನಗಳನ್ನು ಗಂಭೀರವಾಗಿ ಪರಿಗಣಿಸಬೇಕಾದ ಅಗತ್ಯವಿದೆ ಎಂದು ಸಿ.ಟಿ. ರವಿ ಅಭಿಪ್ರಾಯಪಟ್ಟಿದ್ದಾರೆ.

ಧರ್ಮಸ್ಥಳದ ವಿರುದ್ಧದ ಆರೋಪಗಳ ತನಿಖೆ ನಡೆಯುವಂತೆ, ಧರ್ಮಸ್ಥಳದ ವಿರುದ್ಧವೇ ಯಾವುದೇ ಸಂಚು ನಡೆದಿದೆಯೇ ಎಂಬುದರ ಬಗ್ಗೆಯೂ ತನಿಖೆ ನಡೆಸಬೇಕು. ಹಿಂದೂ ಧರ್ಮದ ಶ್ರದ್ಧಾಕೇಂದ್ರಗಳು ಹಾಗೂ ಧಾರ್ಮಿಕ ಸಂಸ್ಥೆಗಳ ವಿರುದ್ಧ ಅಪನಂಬಿಕೆ ಸೃಷ್ಟಿಸುವ ದೊಡ್ಡ ಕಾರ್ಯತಂತ್ರದ ಭಾಗ ಇದಾಗಿತ್ತೇ ಎಂಬ ಪ್ರಶ್ನೆಯೂ ಉದ್ಭವಿಸಿದೆ ಎಂದು ಹೇಳಿದ್ದಾರೆ.

ಸುಮಾರು 200 ಕೋಟಿ ರೂಪಾಯಿಗಳ ಷಡ್ಯಂತ್ರದ ಆರೋಪ ಸಾಮಾನ್ಯ ವಿಷಯವಲ್ಲ. ಹಣದ ಮೂಲ, ಹಣದ ಹರಿವು, ಪ್ರಕರಣದಲ್ಲಿ ಹೆಸರು ಕೇಳಿಬರುತ್ತಿರುವವರ ಪಾತ್ರ, ಸಾಮಾಜಿಕ ಜಾಲತಾಣಗಳ ಮೂಲಕ ನಡೆದಿರುವ ಪ್ರಚಾರ ಹಾಗೂ ಇದರ ಹಿಂದಿರುವ ಸಂಪೂರ್ಣ ಜಾಲವನ್ನು ಪತ್ತೆಹಚ್ಚಬೇಕಾಗಿದೆ ಎಂದು ಒತ್ತಾಯಿಸಿದ್ದಾರೆ.

ಪ್ರಕರಣದ ವ್ಯಾಪ್ತಿ ಕರ್ನಾಟಕವನ್ನು ಮೀರಿ ಇತರ ರಾಜ್ಯಗಳಿಗೂ ವಿಸ್ತರಿಸಿರುವ ಆರೋಪಗಳಿರುವ ಹಿನ್ನೆಲೆಯಲ್ಲಿ ರಾಜ್ಯ ಪೊಲೀಸ್ ಇಲಾಖೆ ಮಾತ್ರ ತನಿಖೆ ನಡೆಸುವುದು ಸಾಕಾಗುವುದಿಲ್ಲ. ಆದ್ದರಿಂದ ಕೇಂದ್ರ ಮಟ್ಟದ ತನಿಖಾ ಸಂಸ್ಥೆಯಾದ ಸಿಬಿಐ ಮೂಲಕ ಸಮಗ್ರ ತನಿಖೆ ನಡೆಸಿದರೆ ಮಾತ್ರ ಪ್ರಕರಣದ ಹಿಂದಿರುವ ಸತ್ಯಾಸತ್ಯತೆ ಬೆಳಕಿಗೆ ಬರಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಸತ್ಯ ಏನೇ ಇದ್ದರೂ ಅದು ಜನರ ಮುಂದೆ ಬರಬೇಕು. ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ನಡೆದಿದ್ದರೆ ಅದರ ಹಿಂದಿರುವವರು ಬಯಲಾಗಬೇಕು. ಆರೋಪಗಳಲ್ಲಿ ಸತ್ಯವಿದ್ದರೆ ಅದು ಕೂಡ ಕಾನೂನಿನ ಮುಂದೆ ಸಾಬೀತಾಗಬೇಕು. ಹೀಗಾಗಿ ರಾಜ್ಯ ಸರ್ಕಾರ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣವೇ ಸಿಬಿಐ ತನಿಖೆಗೆ ಶಿಫಾರಸು ಮಾಡಬೇಕು ಎಂದು ಸಿ.ಟಿ. ರವಿ ತಮ್ಮ ಪತ್ರದಲ್ಲಿ ಒತ್ತಾಯಿಸಿದ್ದಾರೆ.

ಅಕ್ರಮ ಗ್ಯಾಸ್ ಸಿಲಿಂಡರ್ ಗೋದಾಮಿನಲ್ಲಿ ಭಾರೀ ಸ್ಫೋಟ: ಮಾಲೀಕನಿಗೆ ಗಂಭೀರ ಗಾಯ

ದಾವಣಗೆರೆ: ಅಕ್ರಮವಾಗಿ ಸಂಗ್ರಹಿಸಲಾಗಿದ್ದ ಗ್ಯಾಸ್ ಸಿಲಿಂಡರ್‌ಗಳು ಸ್ಫೋಟಗೊಂಡ ಪರಿಣಾಮ ಭಾರೀ ಅಗ್ನಿ ಅವಘಡ ಸಂಭವಿಸಿರುವ ಘಟನೆ ದಾವಣಗೆರೆ ಜಿಲ್ಲೆಯ ಕೆ. ಕಲ್ಪನಹಳ್ಳಿ ಗ್ರಾಮದಲ್ಲಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ-48 ಸಮೀಪದ ಅಡಿಕೆ ತೋಟದಲ್ಲಿರುವ ಗೋದಾಮಿನಲ್ಲಿ ಈ ಸ್ಫೋಟ ಸಂಭವಿಸಿದ್ದು, ಅನಿಲ್ (40) ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಾಹಿತಿಯ ಪ್ರಕಾರ, ಶಿವಕುಮಾರ್ ಅವರಿಗೆ ಸೇರಿದ ಗೋದಾಮನ್ನು ಅನಿಲ್ ಗುತ್ತಿಗೆಗೆ ಪಡೆದಿದ್ದರು. ಗೋದಾಮಿನಲ್ಲಿ ದೊಡ್ಡ ಪ್ರಮಾಣದಲ್ಲಿ ಗ್ಯಾಸ್ ಸಿಲಿಂಡರ್‌ಗಳನ್ನು ಸಂಗ್ರಹಿಸಲಾಗಿದ್ದು, ಅನಿಲ ಸೋರಿಕೆಯಿಂದ ಏಕಾಏಕಿ ಸ್ಫೋಟ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.

ಸ್ಫೋಟದ ತೀವ್ರತೆಗೆ ಹಲವು ಸಿಲಿಂಡರ್‌ಗಳು ಗಾಳಿಗೆ ಹಾರಿ ಚದುರಿಹೋಗಿದ್ದು, ಕೆಲವು ಪಕ್ಕದ ಜಮೀನುಗಳಿಗೂ ಬಿದ್ದಿವೆ. ಘಟನಾ ಸ್ಥಳದಲ್ಲಿ ದಟ್ಟ ಹೊಗೆ ಆವರಿಸಿದ್ದರಿಂದ ಗ್ರಾಮಸ್ಥರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಸುದ್ದಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ದಾವಣಗೆರೆ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಗೋದಾಮಿನಲ್ಲಿ ಇನ್ನೂ ಕೆಲವು ಸಿಲಿಂಡರ್‌ಗಳು ಇರುವ ಶಂಕೆಯಿಂದ ಮತ್ತಷ್ಟು ಸ್ಫೋಟ ಸಂಭವಿಸುವ ಭೀತಿ ಕೆಲಕಾಲ ಕಾಡಿತ್ತು.

ಸದ್ಯ ಸ್ಥಳವನ್ನು ಭದ್ರತಾ ವಲಯವನ್ನಾಗಿ ಘೋಷಿಸಿ ಪರಿಶೀಲನೆ ನಡೆಸಲಾಗುತ್ತಿದ್ದು, ಸಿಲಿಂಡರ್‌ಗಳನ್ನು ಯಾವ ಉದ್ದೇಶಕ್ಕಾಗಿ ಸಂಗ್ರಹಿಸಲಾಗಿತ್ತು ಹಾಗೂ ಸ್ಫೋಟಕ್ಕೆ ನಿಖರ ಕಾರಣವೇನು ಎಂಬ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣ: ವಾರದಲ್ಲಿ ನಾಲ್ಕು ದಿನ ವಿಚಾರಣೆಗೆ ಕೋರ್ಟ್ ಆದೇಶ

ಬೆಂಗಳೂರು: ನಟ ದರ್ಶನ್ ಸೇರಿದಂತೆ ಹಲವರು ಆರೋಪಿಗಳಾಗಿರುವ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಮಹತ್ವದ ಹಂತ ತಲುಪಿದ್ದು, ಪ್ರಕರಣದ ತ್ವರಿತಗತಿ ವಿಚಾರಣೆಗೆ ಸೆಷನ್ಸ್ ನ್ಯಾಯಾಲಯ ಮಹತ್ವದ ಆದೇಶ ಹೊರಡಿಸಿದೆ.

ಸಿಸಿಎಚ್-59 ನ್ಯಾಯಾಲಯವು ವಾರದಲ್ಲಿ ಕನಿಷ್ಠ ನಾಲ್ಕು ದಿನಗಳ ಕಾಲ ನಿರಂತರ ವಿಚಾರಣೆ ನಡೆಸಲು ಸೂಚಿಸಿದ್ದು, ಅಗತ್ಯವಿದ್ದರೆ ಐದನೇ ದಿನವೂ ವಿಚಾರಣೆ ನಡೆಸಲು ಸಿದ್ಧರಿರಬೇಕು ಎಂದು ಉಭಯ ಪಕ್ಷಗಳ ವಕೀಲರಿಗೆ ತಿಳಿಸಿದೆ.

ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಒಂದು ವರ್ಷದೊಳಗೆ ಪ್ರಕರಣದ ಪ್ರಮುಖ 60 ಸಾಕ್ಷಿಗಳ ವಿಚಾರಣೆ ಪೂರ್ಣಗೊಳಿಸಬೇಕಿರುವ ಹಿನ್ನೆಲೆಯಲ್ಲಿ, ಯಾವುದೇ ಕಾರಣಕ್ಕೂ ವಿಚಾರಣೆಯನ್ನು ಅನಗತ್ಯವಾಗಿ ಮುಂದೂಡಬಾರದು ಎಂದು ನ್ಯಾಯಾಲಯ ಖಡಕ್ ಸೂಚನೆ ನೀಡಿದೆ.

ವಿಚಾರಣೆ ವೇಳೆ ಸರ್ಕಾರದ ವಿಶೇಷ ಅಭಿಯೋಜಕ ಪ್ರಸನ್ನ ಕುಮಾರ್ ಅವರು, ಪ್ರಕರಣದ ವೇಗವಾದ ವಿಚಾರಣೆಗಾಗಿ ಪ್ರತಿದಿನವೂ ವಿಚಾರಣೆ ನಡೆಸುವಂತೆ ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ನ್ಯಾಯಾಲಯ, ವಾರಕ್ಕೆ ಕನಿಷ್ಠ ಇಬ್ಬರು ಸಾಕ್ಷಿಗಳ ಪಾಟೀಸವಾಲು ಪೂರ್ಣಗೊಳಿಸಬೇಕು ಹಾಗೂ ತಿಂಗಳಿಗೆ ಕನಿಷ್ಠ ಎಂಟು ಸಾಕ್ಷಿಗಳ ವಿಚಾರಣೆ ಮುಗಿಯಬೇಕು ಎಂದು ನಿರ್ದೇಶನ ನೀಡಿತು.

ಇದೇ ವೇಳೆ ಸಾಕ್ಷಿಯೊಬ್ಬರ ಕ್ರಾಸ್ ಎಕ್ಸಾಮಿನೇಷನ್‌ಗೆ ಹೆಚ್ಚಿನ ಸಮಯ ನೀಡುವಂತೆ ದರ್ಶನ್ ಪರ ವಕೀಲರು ಮನವಿ ಮಾಡಿದಾಗ, ಕಾಲಹರಣಕ್ಕೆ ಅವಕಾಶ ನೀಡಬಾರದು ಎಂದು ಎಸ್‌ಪಿಪಿ ಆಕ್ಷೇಪ ವ್ಯಕ್ತಪಡಿಸಿದರು. ಬಳಿಕ ನ್ಯಾಯಾಲಯದ ಸೂಚನೆಗೆ ದರ್ಶನ್ ಪರ ವಕೀಲರು ಸಹ ಒಪ್ಪಿಗೆ ಸೂಚಿಸಿದರು.

ಇನ್ನೊಂದೆಡೆ, ವಿಡಿಯೋ ಕಾನ್ಫರೆನ್ಸ್ ಮೂಲಕವಲ್ಲದೆ ಖುದ್ದಾಗಿ ನ್ಯಾಯಾಲಯಕ್ಕೆ ಹಾಜರಾಗಲು ಅವಕಾಶ ನೀಡುವಂತೆ ನಟ ದರ್ಶನ್ ಪರ ವಕೀಲರು ವಿಶೇಷ ಅರ್ಜಿ ಸಲ್ಲಿಸಿದ್ದಾರೆ. ಆದರೆ ಇದಕ್ಕೆ ಸರ್ಕಾರದ ಪರ ವಕೀಲರು ವಿರೋಧ ವ್ಯಕ್ತಪಡಿಸಿದ್ದು, ವಿಡಿಯೋ ಕಾನ್ಫರೆನ್ಸ್ ಮೂಲಕವೇ ಹಾಜರಾಗುವುದು ಸಾಕು ಎಂದು ವಾದಿಸಿದ್ದಾರೆ.

ಈ ಅರ್ಜಿಗೆ ಸಂಬಂಧಿಸಿದಂತೆ ಸರ್ಕಾರದ ಪರ ಅಧಿಕೃತ ಆಕ್ಷೇಪಣೆಯನ್ನು ಮಂಗಳವಾರ ಸಲ್ಲಿಸಲಾಗಲಿದ್ದು, ಬಳಿಕ ನ್ಯಾಯಾಲಯ ತೀರ್ಮಾನ ಕೈಗೊಳ್ಳಲಿದೆ.

RSS ಬಗ್ಗೆ ವಿವರಣೆ ಕೇಳಿದ ಪ್ರಿಯಾಂಕ್ ಖರ್ಗೆ: ಸಂಸದ ತೇಜಸ್ವಿ ಸೂರ್ಯ ಹೇಳಿದ್ದೇನು..?

ನವದೆಹಲಿ: ಸಚಿವ ಪ್ರಿಯಾಂಕ್ ಖರ್ಗೆ ಅವರು ಆರ್‌ಎಸ್‌ಎಸ್‌ನ ನೋಂದಣಿ, ಆದಾಯ ಹಾಗೂ ಆಸ್ತಿಪಾಸ್ತಿ ವಿವರಗಳನ್ನು ಕೇಳಿ ಮೋಹನ್ ಭಾಗವತ್ ಅವರಿಗೆ ಪತ್ರ ಬರೆದಿರುವ ವಿಚಾರಕ್ಕೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಪ್ರತಿಕ್ರಿಯೆ ನೀಡಿದ್ದಾರೆ.

ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಿಯಾಂಕ್ ಖರ್ಗೆ ಅವರ ಪ್ರಶ್ನೆಗಳಿಗೆ ಆರ್‌ಎಸ್‌ಎಸ್ ಕಾನೂನುಬದ್ಧವಾಗಿ ಉತ್ತರ ನೀಡಲಿದೆ ಎಂದು ಹೇಳಿದರು. ಸಂಘ-ಸಂಸ್ಥೆಗಳನ್ನು ಸ್ಥಾಪಿಸುವ ಹಕ್ಕನ್ನು ದೇಶದ ಸಂವಿಧಾನವೇ ನೀಡಿದ್ದು, ಅದು ಕೇವಲ ಆರ್‌ಎಸ್‌ಎಸ್‌ಗೆ ಮಾತ್ರ ಸೀಮಿತವಾಗಿಲ್ಲ. ಗ್ರಾಮೀಣ ಭಾಗದ ಕೆಲ ಯುವಕರೂ ಸೇರಿ ಸಂಘಟನೆಯನ್ನು ಕಟ್ಟಬಹುದು ಎಂದು ತಿಳಿಸಿದರು.

ಆರ್‌ಎಸ್‌ಎಸ್ ಸಂವಿಧಾನ ಜಾರಿಗೆ ಬರುವುದಕ್ಕೂ ಮುನ್ನ ಹಾಗೂ ಬ್ರಿಟಿಷರ ಆಡಳಿತದ ಕಾಲದಿಂದಲೂ ಕಾರ್ಯನಿರ್ವಹಿಸುತ್ತಿದೆ. ಸಂಘದ ಆಸ್ತಿ, ಹಣಕಾಸು ವ್ಯವಹಾರಗಳು ಎಲ್ಲವೂ ನಿಯಮಾನುಸಾರ ನಡೆಯುತ್ತಿವೆ ಎಂದು ಹೇಳಿದರು.

ಪ್ರಿಯಾಂಕ್ ಖರ್ಗೆ ಇದೇ ಮೊದಲ ಬಾರಿಗೆ ಆರ್‌ಎಸ್‌ಎಸ್ ಬಗ್ಗೆ ಪ್ರಶ್ನೆ ಎತ್ತುತ್ತಿಲ್ಲ. ಐಟಿ-ಬಿಟಿ ಇಲಾಖೆಯಲ್ಲಿ ಸಂಶೋಧನೆ ಮತ್ತು ನವೋದ್ಯಮಗಳಿಗೆ ಉತ್ತೇಜನ ನೀಡಬೇಕಿದ್ದ ಅವರು, ಈಗ ಆರ್‌ಎಸ್‌ಎಸ್ ಬಗ್ಗೆ ಸಂಶೋಧನೆ ನಡೆಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

ಹಿಂದೆಯೂ ಆರ್‌ಎಸ್‌ಎಸ್ ಪಥಸಂಚಲನಕ್ಕೆ ವಿರೋಧ ವ್ಯಕ್ತವಾಗಿತ್ತು. ಆದರೆ ನ್ಯಾಯಾಲಯ ಅನುಮತಿ ನೀಡಿದ ಬಳಿಕ ಕಾರ್ಯಕ್ರಮ ಯಶಸ್ವಿಯಾಗಿ ನಡೆದಿತ್ತು. ವಿರೋಧ ಹೆಚ್ಚಾದಷ್ಟು ಸಂಘದ ವಿಚಾರಧಾರೆ ಮತ್ತಷ್ಟು ಬಲಗೊಳ್ಳುತ್ತದೆ ಎಂದು ಹೇಳಿದರು.

ದೇಶದ ಸಂವಿಧಾನದ ಚೌಕಟ್ಟಿನಲ್ಲಿಯೇ ಆರ್‌ಎಸ್‌ಎಸ್ ಕಾರ್ಯನಿರ್ವಹಿಸುತ್ತಿದೆ. ನೋಂದಣಿ ಸೇರಿದಂತೆ ವಿವಿಧ ವಿಚಾರಗಳ ಬಗ್ಗೆ ಈಗಾಗಲೇ ಸಾಕಷ್ಟು ಚರ್ಚೆಗಳು ನಡೆದಿವೆ. ಈ ವಿಷಯದಲ್ಲಿ ಪ್ರಿಯಾಂಕ್ ಖರ್ಗೆ ಅವರು ಮೊದಲು ಕಾನೂನು ಸಲಹೆ ಪಡೆಯಬೇಕಿತ್ತು. ಸೂಕ್ತ ಸಮಯದಲ್ಲಿ ಆರ್‌ಎಸ್‌ಎಸ್ ಹಾಗೂ ಜನರೇ ಇದಕ್ಕೆ ಉತ್ತರ ನೀಡಲಿದ್ದಾರೆ ಎಂದು ತೇಜಸ್ವಿ ಸೂರ್ಯ ಹೇಳಿದರು.

error: Content is protected !!