ಬೆಂಗಳೂರು: ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ತಾವು ಸ್ಪರ್ಧಿಸುವುದಿಲ್ಲ ಎಂದು ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.
ಜೆಪಿ ಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಿರಿಯೂರು ಉಪಚುನಾವಣೆಯಲ್ಲಿ ಜೆಡಿಎಸ್ ಸ್ಪರ್ಧಿಸಬೇಕು ಎಂಬ ಅಭಿಪ್ರಾಯವಿದೆ. ಆದರೆ ತಾವು ಅಭ್ಯರ್ಥಿಯಾಗುವುದಿಲ್ಲ ಎಂದು ಹೇಳಿದರು. “ಉಪಚುನಾವಣೆಯಲ್ಲಿ ಸ್ಪರ್ಧಿಸುವುದು ನನ್ನ ಕೆಲಸವಲ್ಲ.
ನಾನು ಕೇಂದ್ರ ಸಚಿವನಾಗಿದ್ದು, ನನ್ನ ಜವಾಬ್ದಾರಿಯನ್ನು ನಿರ್ವಹಿಸುತ್ತೇನೆ. ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರಿಯಲಿದೆ. ರಾಜ್ಯದಲ್ಲಿರುವ ಈ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸುವ ನಿಟ್ಟಿನಲ್ಲಿ ಒಟ್ಟಾಗಿ ಕೆಲಸ ಮಾಡುತ್ತೇವೆ. ಈ ಸಂಬಂಧ ಈಗಾಗಲೇ ಬಿಜೆಪಿ ಹೈಕಮಾಂಡ್ಗೂ ಮನವಿ ಮಾಡಿದ್ದೇನೆ” ಎಂದು ತಿಳಿಸಿದರು.
ಮೈಸೂರಿನಲ್ಲಿ ನೀಡಿದ್ದ “ರಾಜ್ಯಕ್ಕೆ ವಾಪಸ್ ಬರುತ್ತೇನೆ” ಎಂಬ ಹೇಳಿಕೆ ಕುರಿತು ಸ್ಪಷ್ಟನೆ ನೀಡಿದ ಅವರು, “ಅದರ ಅರ್ಥ ತಕ್ಷಣವೇ ರಾಜ್ಯ ರಾಜಕೀಯಕ್ಕೆ ಮರಳುತ್ತೇನೆ ಎನ್ನುವುದಲ್ಲ. ಇನ್ನೂ ಎರಡು ವರ್ಷಗಳ ಅವಧಿ ಇದೆ. ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರದಲ್ಲಿ ನನಗೆ ಜವಾಬ್ದಾರಿ ನೀಡಿದ್ದಾರೆ. ಇನ್ನೂ ಮೂರು ವರ್ಷ ಕೇಂದ್ರ ಸಚಿವನಾಗಿ ಕೆಲಸ ಮಾಡುತ್ತೇನೆ. ಜೊತೆಗೆ ರಾಜ್ಯದಲ್ಲಿ ಪಕ್ಷ ಸಂಘಟನೆಯ ಕೆಲಸವನ್ನೂ ಮುಂದುವರಿಸುತ್ತೇನೆ” ಎಂದರು.
ರಾಜ್ಯ ಸರ್ಕಾರ ಕೂಡಲೇ ವಿಧಾನಮಂಡಲ ಅಧಿವೇಶನವನ್ನು ಕರೆಯಬೇಕು ಎಂದು ಆಗ್ರಹಿಸಿದ ಕುಮಾರಸ್ವಾಮಿ, ಎಸ್ಐಆರ್ ವಿಚಾರಕ್ಕೂ ಅಧಿವೇಶನಕ್ಕೂ ಯಾವುದೇ ಸಂಬಂಧ ಇಲ್ಲ. ರಾಜ್ಯದಲ್ಲಿ ಅನೇಕ ಗಂಭೀರ ಸಮಸ್ಯೆಗಳಿದ್ದು, ಅವುಗಳ ಕುರಿತು ಸದನದಲ್ಲಿ ಚರ್ಚೆ ನಡೆಯಬೇಕು. ಆದ್ದರಿಂದ ಸರ್ಕಾರ ವಿಳಂಬ ಮಾಡದೆ ಅಧಿವೇಶನ ನಡೆಸಬೇಕು ಎಂದು ಒತ್ತಾಯಿಸಿದರು.
ರೈತರ ಸಮಸ್ಯೆಗಳ ಕುರಿತು ಮಾತನಾಡಿದ ಅವರು, ಮಂಡ್ಯ ಜಿಲ್ಲೆಯಲ್ಲಿ ಕಬ್ಬಿನ ಬೆಳೆ ನೀರಿನ ಕೊರತೆಯಿಂದ ಒಣಗುತ್ತಿದೆ. ರೈತರ ಬೆಳೆ ಉಳಿಸಲು ಸರ್ಕಾರ ತಕ್ಷಣವೇ ನೀರು ಹರಿಸಬೇಕು. ತಮಿಳುನಾಡಿಗೆ ನೀಡಬೇಕಿರುವ ನೀರನ್ನು ನಂತರ ಮಳೆ ಬಂದ ಬಳಿಕ ಬಿಡುಗಡೆ ಮಾಡಬಹುದು. ಮೊದಲ ಆದ್ಯತೆ ರಾಜ್ಯದ ರೈತರ ಬೆಳೆ ರಕ್ಷಣೆಗೆ ನೀಡಬೇಕು ಎಂದು ಹೇಳಿದರು.
ರಾಜ್ಯದಲ್ಲಿ ಕೃಷಿ ಇಲಾಖೆಯ ಸಮಸ್ಯೆಗಳತ್ತ ಸರ್ಕಾರ ಗಂಭೀರವಾಗಿ ಗಮನ ಹರಿಸಬೇಕು ಎಂದು ಸಲಹೆ ನೀಡಿದ ಅವರು, “ರಾಜ್ಯದಲ್ಲಿ ಕೃಷಿ ಸಚಿವರಿಲ್ಲ. ಮುಖ್ಯಮಂತ್ರಿ ಅವರೇ ಇಲಾಖೆಯ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಬರ ಪರಿಸ್ಥಿತಿಯಿಂದ ರೈತರು ಸಂಕಷ್ಟದಲ್ಲಿದ್ದಾರೆ. ಕೆಲವೆಡೆ ಮಳೆ ಕೊರತೆಯಿದ್ದರೆ, ಇನ್ನೂ ಕೆಲವು ಭಾಗಗಳಲ್ಲಿ ಅತಿವೃಷ್ಟಿಯಿಂದ ಜನರು ತೊಂದರೆ ಅನುಭವಿಸುತ್ತಿದ್ದಾರೆ. ಸರ್ಕಾರ ಎರಡೂ ಪರಿಸ್ಥಿತಿಗಳನ್ನು ಸಮರ್ಥವಾಗಿ ನಿಭಾಯಿಸಿ ರೈತರು ಹಾಗೂ ಜನರ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಲ್ಪಿಸಬೇಕು” ಎಂದು ಆಗ್ರಹಿಸಿದರು.

