Home Blog

ತಮಿಳುನಾಡಿನಲ್ಲಿ ವಿಜಯ್ ಅಲೆ: TVK ಭರ್ಜರಿ ಮುನ್ನಡೆಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ

ಬೆಂಗಳೂರು: ತಮಿಳುನಾಡು ವಿಧಾನಸಭಾ ಚುನಾವಣೆಯ ಮತ ಎಣಿಕೆಯಲ್ಲಿ ಟಿವಿಕೆ ಭಾರೀ ಮುನ್ನಡೆ ಸಾಧಿಸಿರುವ ಹಿನ್ನೆಲೆ ಪಕ್ಷದ ಮುಖ್ಯಸ್ಥ ನಟ ವಿಜಯ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ.

ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ತಮಿಳುನಾಡಿನಲ್ಲಿ ಆಡಳಿತ ವಿರೋಧಿ ಅಲೆ ಸ್ಪಷ್ಟವಾಗಿ ಕಾಣಿಸುತ್ತಿದೆ. ಜೊತೆಗೆ ಹೊಸ ರಾಜಕೀಯ ಶಕ್ತಿಯಾಗಿ ಹೊರಹೊಮ್ಮಿರುವ ಟಿವಿಕೆ ಪಕ್ಷಕ್ಕೆ ವಿಜಯ್ ಅವರ ಜನಪ್ರಿಯತೆ ದೊಡ್ಡ ಮಟ್ಟದಲ್ಲಿ ನೆರವಾಗಿರಬಹುದು ಎಂದು ಅಭಿಪ್ರಾಯಪಟ್ಟರು.

“ವಿಜಯ್ ಅವರಿಗೆ ಅಭಿನಂದನೆಗಳು. ಹೊಸ ಪಕ್ಷವಾಗಿ ಉತ್ತಮ ಪ್ರದರ್ಶನ ತೋರಿರುವುದು ಗಮನಾರ್ಹ ಬೆಳವಣಿಗೆ” ಎಂದು ಸಿದ್ದರಾಮಯ್ಯ ಹೇಳಿದರು.

ರಾಜ್ಯದ ಉಪಚುನಾವಣೆಗಳ ಕುರಿತು ಪ್ರತಿಕ್ರಿಯಿಸಿದ ಅವರು, ದಾವಣಗೆರೆಯಲ್ಲಿ ಕೆಲವು ಸ್ಥಳೀಯ ಕಾರಣಗಳಿಂದ ಕಾಂಗ್ರೆಸ್ ಮುನ್ನಡೆ ಕಡಿಮೆಯಾಗಿರಬಹುದು. ಆದರೂ ಅಂತಿಮವಾಗಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ ಎಂದರು. ಬಾಗಲಕೋಟೆಯಲ್ಲೂ ಕಾಂಗ್ರೆಸ್ ಗೆಲ್ಲಲಿದೆ ಎಂದು ಅವರು ಭರವಸೆ ವ್ಯಕ್ತಪಡಿಸಿದರು.

ಪಶ್ಚಿಮ ಬಂಗಾಳದ ಫಲಿತಾಂಶ ಕುರಿತು ಮಾತನಾಡಿದ ಸಿದ್ದರಾಮಯ್ಯ, ಅಲ್ಲಿ ಕಾಂಗ್ರೆಸ್ ಪ್ರಭಾವ ಸೀಮಿತವಾಗಿದ್ದು, ಬಿಜೆಪಿ ಮುನ್ನಡೆಗೆ ಆಡಳಿತ ವಿರೋಧಿ ಅಲೆ ಕಾರಣವಾಗಿರಬಹುದು ಎಂದು ಹೇಳಿದರು.

ಅಸ್ಸಾಂನಲ್ಲಿ ಸೋಲನ್ನು ಒಪ್ಪಿಕೊಳ್ಳಬೇಕಾಗಿದೆ ಎಂದ ಅವರು, ಕೇರಳದಲ್ಲಿ ಕಾಂಗ್ರೆಸ್ ನಿರೀಕ್ಷೆಗೂ ಮೀರಿದ ಮುನ್ನಡೆ ಸಾಧಿಸಿರುವುದು ಪಕ್ಷಕ್ಕೆ ಉತ್ಸಾಹ ತುಂಬಿದೆ ಎಂದು ಸಂತಸ ವ್ಯಕ್ತಪಡಿಸಿದರು.

ವ್ಯಾಪಾರಿಯ ಮೇಲೆ ಹಲ್ಲೆ: ಜೀವ ಬೆದರಿಕೆ ಹಾಕಿ ಹಣ ಕಿತ್ತು ಮೂವರು ಪರಾರಿ

ಗದಗ: ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಬಸ್ ನಿಲ್ದಾಣದ ಸಾರ್ವಜನಿಕ ಶೌಚಾಲಯದಲ್ಲಿ ವ್ಯಾಪಾರಿಯೊಬ್ಬರ ಮೇಲೆ ಮೂವರು ಆರೋಪಿಗಳು ಹಲ್ಲೆ ನಡೆಸಿ ₹7,700 ನಗದು ದೋಚಿದ ಘಟನೆ ನಡೆದಿದೆ.

ಈ ಸಂಬಂಧ ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗಾಗಿ ಪೊಲೀಸರು ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ.

ಮೂಲತಃ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸೋಲಾಪುರ ಗ್ರಾಮದ ಮಹಾದೇವ ಕಲ್ಲಪ್ಪ ಗೋಳಭಾವಿ (29) ಹಲ್ಲೆಗೊಳಗಾಗಿ ಹಣ ಕಳೆದುಕೊಂಡ ವ್ಯಾಪಾರಿ.

ಎಪ್ರಿಲ್ 25ರಂದು ರಾತ್ರಿ ಸುಮಾರು 10 ಗಂಟೆ ವೇಳೆಗೆ, ಮಹಾದೇವ ಅವರು ಲಕ್ಷ್ಮೇಶ್ವರ ಬಸ್ ನಿಲ್ದಾಣದ ಸಾರ್ವಜನಿಕ ಶೌಚಾಲಯದಲ್ಲಿ ಇದ್ದಾಗ, ಆರೋಪಿಗಳಾದ
ವಿನಾಯಕ @ ವಿನಾಯಕ ಗದಗ (A1), ಮಹೇಶ್ @ ಮಹೇಶ್ ಗದಗ (A2), ಶಂಕರ್ @ ಶಂಕರ್ ಗದಗ (A3)
ಎಂಬ ಮೂವರು ಒಟ್ಟಾಗಿ ಬಂದು ಹಲ್ಲೆ ನಡೆಸಿದ್ದಾರೆ.

ಆರೋಪಿಗಳು “ನಿನ್ನ ಬಳಿ ಇರುವ ಹಣ ಮತ್ತು ಮೊಬೈಲ್ ಕೊಡದಿದ್ದರೆ ಕೊಲ್ಲುತ್ತೇವೆ” ಎಂದು ಜೀವ ಬೆದರಿಕೆ ಹಾಕಿ, ದೈಹಿಕ ಹಲ್ಲೆ ನಡೆಸಿ, ಜೇಬಿನಲ್ಲಿ ಇದ್ದ ₹7,700 ನಗದು ಹಣವನ್ನು ಬಲವಂತವಾಗಿ ಕಿತ್ತುಕೊಂಡು ಪರಾರಿಯಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಕುರಿತು ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) 2023ರ ಸೆಕ್ಷನ್‌ಗಳು 308(5), 351(2), 352, 3(5) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದು, ಆರೋಪಿಗಳ ಬಂಧನಕ್ಕೆ ಕ್ರಮ ಕೈಗೊಂಡಿದ್ದಾರೆ.

ಕಮ್ಯುನಿಸ್ಟ್ ಆಡಳಿತಕ್ಕೆ ಅಂತ್ಯವೇ? ಕೇರಳದಲ್ಲಿ UDF ಅಬ್ಬರ, LDF ಗೆ ಭಾರೀ ಹಿನ್ನಡೆ

ತಿರುವನಂತಪುರಂ: 140 ಸದಸ್ಯ ಬಲದ ಕೇರಳ ವಿಧಾನಸಭಾ ಚುನಾವಣೆಯ ಮತ ಎಣಿಕೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಅತಿದೊಡ್ಡ ಮೈತ್ರಿಕೂಟವಾಗಿ ಹೊರಹೊಮ್ಮಿದ್ದು, ಕಳೆದ ಎರಡು ದಶಕಗಳಲ್ಲಿಯೇ ತನ್ನ ಅತ್ಯುತ್ತಮ ಪ್ರದರ್ಶನ ದಾಖಲಿಸುವತ್ತ ಮುನ್ನಡೆಯುತ್ತಿದೆ.

ಈ ಫಲಿತಾಂಶದೊಂದಿಗೆ ದೇಶದಲ್ಲಿ ಆಡಳಿತದಲ್ಲಿದ್ದ ಏಕೈಕ ಕಮ್ಯುನಿಸ್ಟ್ ಸರ್ಕಾರವೂ ಅಧಿಕಾರ ಕಳೆದುಕೊಳ್ಳುವ ಎಲ್ಲ ಲಕ್ಷಣಗಳು ಸ್ಪಷ್ಟವಾಗಿ ಗೋಚರಿಸುತ್ತಿವೆ. ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್ ಸರ್ಕಾರಕ್ಕೆ ಈ ಚುನಾವಣೆ ಭಾರೀ ಹಿನ್ನಡೆಯಾಗುವ ಸಾಧ್ಯತೆಗಳು ಹೆಚ್ಚಿವೆ.

2001ರ ವಿಧಾನಸಭಾ ಚುನಾವಣೆಯಲ್ಲಿ ಯುಡಿಎಫ್ 99 ಸ್ಥಾನಗಳನ್ನು ಗೆದ್ದು ಐತಿಹಾಸಿಕ ಸಾಧನೆ ಮಾಡಿತ್ತು. ಇದೀಗ ಅದೇ ಮಟ್ಟದ ಅಥವಾ ಅದಕ್ಕಿಂತ ಉತ್ತಮ ಫಲಿತಾಂಶದತ್ತ ಕಾಂಗ್ರೆಸ್ ಮೈತ್ರಿಕೂಟ ಸಾಗುತ್ತಿರುವುದು ಪಕ್ಷದ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ಮೂಡಿಸಿದೆ.

ಪ್ರಸ್ತುತ ಸಿಪಿಐ(ಎಂ) ನೇತೃತ್ವದ ಲೆಫ್ಟ್ ಡೆಮಾಕ್ರಟಿಕ್ ಫ್ರಂಟ್ (ಎಲ್‌ಡಿಎಫ್) ಹಲವು ಪ್ರಮುಖ ಕ್ಷೇತ್ರಗಳಲ್ಲಿ ಹಿನ್ನಡೆ ಅನುಭವಿಸುತ್ತಿದ್ದು, ಭಾರೀ ಸೋಲಿನತ್ತ ಸಾಗುತ್ತಿದೆ ಎಂಬುದನ್ನು ಆರಂಭಿಕ ಮತ ಎಣಿಕೆ ಅಂಕಿ-ಅಂಶಗಳು ಸೂಚಿಸುತ್ತಿವೆ.

ವಿರೋಧ ಪಕ್ಷದ ನಾಯಕ ವಿ.ಡಿ. ಸತೀಶನ್ ನೇತೃತ್ವದಲ್ಲಿ ನಡೆದ ಪ್ರಚಾರ ಅಭಿಯಾನದಲ್ಲಿ ಕಾಂಗ್ರೆಸ್ 100 ಸ್ಥಾನಗಳ ಗುರಿ ಹೊಂದಿತ್ತು. 10 ವರ್ಷಗಳ ಬಳಿಕ ಮತ್ತೆ ಅಧಿಕಾರಕ್ಕೆ ಮರಳುವ ಉದ್ದೇಶದೊಂದಿಗೆ ನಡೆಸಿದ ತಂತ್ರಾತ್ಮಕ ಪ್ರಚಾರ ಇದೀಗ ಫಲ ನೀಡುತ್ತಿರುವಂತೆ ಕಾಣುತ್ತಿದೆ.

ರಾಜ್ಯದ ವಿವಿಧ ಭಾಗಗಳಲ್ಲಿ ಯುಡಿಎಫ್ ಗಮನಾರ್ಹ ಮುನ್ನಡೆ ಸಾಧಿಸಿದ್ದು, ಎಲ್‌ಡಿಎಫ್ ಪರಂಪರೆಯಿಂದ ಬಲಿಷ್ಠವಾಗಿದ್ದ ಕ್ಷೇತ್ರಗಳಲ್ಲಿಯೂ ಉತ್ತಮ ಮತಗಳನ್ನು ಗಳಿಸಿರುವುದು ವಿಶೇಷವಾಗಿದೆ.

ಇದೇ ಫಲಿತಾಂಶ ಅಂತಿಮ ಹಂತದಲ್ಲೂ ಮುಂದುವರಿದರೆ, ಕೇರಳದಲ್ಲಿ ದಶಕದ ಬಳಿಕ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರದ ಚುಕ್ಕಾಣಿ ಹಿಡಿಯುವುದು ಬಹುತೇಕ ಖಚಿತವಾಗಲಿದೆ.

ದಾವಣಗೆರೆ, ಬಾಗಲಕೋಟೆ 2 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ: ಸಚಿವ ಜಿ. ಪರಮೇಶ್ವರ್

ಬೆಂಗಳೂರು: ದಾವಣಗೆರೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ಮುನ್ನಡೆ ಕಡಿಮೆಯಿದೆ ಎಂಬ ಕಾರಣಕ್ಕೆ ತಕ್ಷಣವೇ ಯಾವುದೇ ನಿರ್ಧಾರಕ್ಕೆ ಬರುವುದು ಸರಿಯಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ. ಅಭ್ಯರ್ಥಿ ಸಮರ್ಥ್ ಪ್ರಸ್ತುತ ಮುನ್ನಡೆಯಲ್ಲಿದ್ದು, ಅಂತಿಮ ಫಲಿತಾಂಶ ಹೊರಬರುವವರೆಗೂ ಕಾದು ನೋಡುವುದು ಸೂಕ್ತ ಎಂದು ಅವರು ಅಭಿಪ್ರಾಯಪಟ್ಟರು.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ದಾವಣಗೆರೆ ಹಾಗೂ ಬಾಗಲಕೋಟೆ ಉಪಚುನಾವಣೆ ಫಲಿತಾಂಶಗಳ ಕುರಿತು ಪ್ರತಿಕ್ರಿಯಿಸಿ, ನಮಗೆ ಲಭ್ಯವಾಗಿರುವ ಮಾಹಿತಿ ಪ್ರಕಾರ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ ಎಂದು ಹೇಳಿದರು.

ರಾಜ್ಯ ಸರ್ಕಾರ ಜಾರಿಗೆ ತಂದಿರುವ ಜನಪರ ಕಾರ್ಯಕ್ರಮಗಳು ಕಾಂಗ್ರೆಸ್ ಅಭ್ಯರ್ಥಿಗಳಿಗೆ ನೆರವಾಗಲಿದ್ದು, ಅಂತಿಮ ಹಂತದವರೆಗೆ ಫಲಿತಾಂಶದ ಬಗ್ಗೆ ತಾಳ್ಮೆಯಿಂದ ಕಾಯಬೇಕು ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪಶ್ಚಿಮ ಬಂಗಾಳ ಚುನಾವಣಾ ಫಲಿತಾಂಶದ ಕುರಿತು ಮಾತನಾಡಿದ ಸಚಿವರು, ಅಲ್ಲಿ ಬಿಜೆಪಿ ಕಾರ್ಯಕರ್ತರ ನಡೆ ಕುರಿತು ಈಗಾಗಲೇ ಹಲವು ಪ್ರಶ್ನೆಗಳು ಉದ್ಭವಿಸಿವೆ ಎಂದರು. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು 96 ಲಕ್ಷಕ್ಕೂ ಅಧಿಕ ಮತಗಳನ್ನು ಅಳಿಸಲಾಗಿದೆ ಎಂದು ಮಾಡಿರುವ ಆರೋಪ ಗಂಭೀರ ಸ್ವರೂಪದ್ದಾಗಿದೆ. ಈ ಆರೋಪ ಸತ್ಯವಾಗಿದ್ದರೆ ಅಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಚುನಾವಣಾ ಪ್ರಕ್ರಿಯೆ ಎಷ್ಟರ ಮಟ್ಟಿಗೆ ಸಮರ್ಪಕವಾಗಿ ಪಾಲನೆಯಾಗಿದೆ ಎಂಬುದನ್ನು ಪರಿಶೀಲಿಸಬೇಕಾಗಿದೆ ಎಂದು ಹೇಳಿದರು.

ಜಾತ್ರೆ ಅವಘಡಕ್ಕೆ ಜಿಲ್ಲಾಡಳಿತದ ನಿರ್ಲಕ್ಷ್ಯವೇ ಕಾರಣ: ಕಠಿಣ ಕ್ರಮಕ್ಕೆ ಆಗ್ರಹ

ಗದಗ: ಜಾತ್ರೆಯಲ್ಲಿ ಸಂಭವಿಸಿದ ದುರ್ಘಟನೆಗೆ ಜಿಲ್ಲಾಡಳಿತದ ನಿರ್ಲಕ್ಷವೇ ಮುಖ್ಯ ಕಾರಣ ಎಂದು ಸಾಮಾಜಿಕ ಮಾಹಿತಿ ಹಕ್ಕುಗಳ ಹೋರಾಟಗಾರ ವಿನೋದ ಶಿದ್ಲಿಂಗ್ ಆರೋಪಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಜಾತ್ರೆಯಲ್ಲಿ ಅಪಾಯ ಸಂಭವಿಸುವ ಬಗ್ಗೆ ಮೊದಲೇ ಎಚ್ಚರಿಕೆ ನೀಡಿದ್ದರೂ, ಜಿಲ್ಲಾಡಳಿತ ಯಾವುದೇ ಕ್ರಮ ಕೈಗೊಳ್ಳದೇ ನಿರ್ಲಕ್ಷ ವಹಿಸಿದೆ ಎಂದು ಕಿಡಿಕಾರಿದ್ದಾರೆ.

ಜಾತ್ರೆಯನ್ನು ನಡೆಸುತ್ತಿರುವ ಆಯೋಜಕರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಘಟನೆಗೆ ಹೊಣೆಗಾರರಾದವರನ್ನು ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಗಾಯಗೊಂಡವರ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕು. ಅವಘಡಕ್ಕೆ ಕಾರಣವಾದ ಯಂತ್ರೋಪಕರಣಗಳನ್ನು ಬಳಕೆ ಮಾಡಿದವರ ಮೇಲೂ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.

ಮುಂದೆ ಇಂತಹ ದುರ್ಘಟನೆಗಳು ನಡೆಯದಂತೆ, ಜಾತ್ರೆಗಳಿಗೆ ಕೇವಲ ಮನೆ ಉಪಯೋಗದ ವಸ್ತುಗಳ ಮಾರಾಟಕ್ಕೆ ಮಾತ್ರ ಅನುಮತಿ ನೀಡಬೇಕು. ಜನರ ಪ್ರಾಣಕ್ಕೆ ಅಪಾಯ ಉಂಟುಮಾಡುವಂತಹ ಆಟೋಟಗಳಿಗೆ ಸಂಪೂರ್ಣ ನಿಷೇಧ ವಿಧಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಇಂತಹ ಅವೈಜ್ಞಾನಿಕ ಮತ್ತು ಅಪಾಯಕಾರಿ ಆಟಗಳನ್ನು ತಕ್ಷಣವೇ ಜಾತ್ರೆಯಿಂದ ತೆರವುಗೊಳಿಸಿ, ಮುಂದಿನ ದಿನಗಳಲ್ಲಿ ಇವುಗಳಿಗೆ ಅವಕಾಶ ನೀಡದಂತೆ ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಬೈರತಿ ಬಸವರಾಜ್ʼಗೆ ಮತ್ತೊಂದು ಸಂಕಷ್ಟ: ಆಪ್ ನಾಯಕಿಯ ಕಾರು ಧ್ವಂಸ ಆರೋಪ

ಬೆಂಗಳೂರು: ಬಿಕ್ಲು ಶಿವು ಕೊಲೆ ಪ್ರಕರಣದ ತನಿಖೆ ಎದುರಿಸುತ್ತಿರುವ ಕೆ.ಆರ್. ಪುರಂ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಈ ಹಿಂದೆ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಅವರು ಇದೀಗ ತಮ್ಮ ಬೆಂಬಲಿಗರಿಂದ ಹಲ್ಲೆ ಹಾಗೂ ಬೆದರಿಕೆ ಎದುರಿಸಿದ್ದೇನೆ ಎಂದು ಆಮ್ ಆದ್ಮಿ ಪಕ್ಷದ ನಾಯಕಿ ನೀಡಿರುವ ದೂರಿನಿಂದ ಮತ್ತೆ ಸುದ್ದಿಯಾಗಿದ್ದಾರೆ.

ಬಿಕ್ಲು ಶಿವು ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಬೈರತಿ ಬಸವರಾಜ್ ನ್ಯಾಯಾಂಗ ಬಂಧನದಿಂದ ಜಾಮೀನಿನ ಮೇಲೆ ಬಿಡುಗಡೆಯಾದ ಬೆನ್ನಲ್ಲೇ ಈ ಹೊಸ ವಿವಾದ ತಲೆದೋರಿದೆ. ಆಮ್ ಆದ್ಮಿ ಪಕ್ಷದ ವಿಜ್ಞಾನನಗರ ವಾರ್ಡ್ ಅಧ್ಯಕ್ಷೆ ಸತ್ಯವಾಣಿ, ಶಾಸಕರ ಬೆಂಬಲಿಗರು ತಮ್ಮ ಮನೆ ಮುಂದೆ ನಿಲ್ಲಿಸಿದ್ದ ಕಾರನ್ನು ಧ್ವಂಸಗೊಳಿಸಿದ್ದು, ತಮಗೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ದೂರು ದಾಖಲಿಸಿದ್ದಾರೆ.

ಇದೇ ವೇಳೆ, ಕಳೆದ ತಿಂಗಳು ಕೂಡ ತಮ್ಮ ಚಾರಿತ್ರ್ಯಕ್ಕೆ ಧಕ್ಕೆ ತರುವ ಉದ್ದೇಶದಿಂದ ವಾರ್ಡ್‌ನಾದ್ಯಂತ ಸುಮಾರು 50ಕ್ಕೂ ಹೆಚ್ಚು ಬೃಹತ್ ಫ್ಲೆಕ್ಸ್ ಬ್ಯಾನರ್‌ಗಳನ್ನು ಅಳವಡಿಸಲಾಗಿತ್ತು ಎಂದು ಸತ್ಯವಾಣಿ ಆರೋಪಿಸಿದ್ದಾರೆ. ಈ ಕುರಿತು ಆರಂಭದಲ್ಲಿ ದೂರು ನೀಡಲು ಎಚ್‌ಎಎಲ್ ಪೊಲೀಸ್ ಠಾಣೆಗೆ ತೆರಳಿದಾಗ, ಶಾಸಕರ ಒತ್ತಡಕ್ಕೆ ಮಣಿದು ಪೊಲೀಸರು ದೂರು ಸ್ವೀಕರಿಸಲು ನಿರಾಕರಿಸಿದ್ದರು ಎಂದು ಅವರು ದೂರಿದ್ದಾರೆ. ಬಳಿಕ ಲೋಕಾಯುಕ್ತರ ಮೊರೆ ಹೋದ ನಂತರವೇ ಪ್ರಕರಣ ದಾಖಲಾಗಿತ್ತು ಎಂದು ತಿಳಿಸಿದ್ದಾರೆ.

ಮುಂಬರುವ ಜಿಬಿಎ ಚುನಾವಣೆಗೆ ಸ್ಪರ್ಧಿಸಲು ತಾವು ಸಿದ್ಧತೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಉದ್ದೇಶಪೂರ್ವಕವಾಗಿ ಈ ರೀತಿಯ ಬೆದರಿಕೆ ಹಾಗೂ ದಾಳಿ ನಡೆಯುತ್ತಿದೆ ಎಂದು ಸತ್ಯವಾಣಿ ಆರೋಪಿಸಿದ್ದಾರೆ. ಹಲವು ವರ್ಷಗಳಿಂದ ಕೆರೆ ಒತ್ತುವರಿ ವಿರುದ್ಧ ಹೋರಾಟ ನಡೆಸುತ್ತಿರುವ ಕಾರಣದಿಂದಲೇ ತಮಗೆ ಟಾರ್ಗೆಟ್ ಮಾಡಲಾಗುತ್ತಿದೆ ಎಂದೂ ಅವರು ಹೇಳಿದ್ದಾರೆ.

ತಮಗೆ ಏನಾದರೂ ಅನಾಹುತ ಸಂಭವಿಸಿದರೆ ಅದಕ್ಕೆ ನೇರ ಹೊಣೆಗಾರರು ಶಾಸಕ ಬೈರತಿ ಬಸವರಾಜ್ ಅವರೇ ಎಂದು ಎಚ್ಚರಿಕೆ ನೀಡಿರುವ ಸತ್ಯವಾಣಿ, ಪೊಲೀಸರು ಶಾಸಕರ ಪ್ರಭಾವಕ್ಕೆ ಒಳಗಾಗಿ ಕೆಲಸ ಮಾಡುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆ ಕೆ.ಆರ್. ಪುರಂ ಪ್ರದೇಶದಲ್ಲಿ ಮಹಿಳೆಯರ ಸುರಕ್ಷತೆ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎಬ್ಬಿಸಿದೆ ಎಂದೂ ಅವರು ಹೇಳಿದ್ದಾರೆ.

ಉল্লেখನೀಯವಾಗಿ, 2025ರ ಜುಲೈ 15ರಂದು ಬೆಂಗಳೂರಿನ ಭಾರತೀನಗರದಲ್ಲಿ ರೌಡಿ ಶೀಟರ್ ಬಿಕ್ಲು ಶಿವು ಅಲಿಯಾಸ್ ಶಿವಕುಮಾರ್ ಅವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಕಿತ್ತಗನೂರಿನ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ನಡೆದ ಈ ಪ್ರಕರಣದಲ್ಲಿ ಬೈರತಿ ಬಸವರಾಜ್ ಅವರನ್ನು ಐದನೇ ಆರೋಪಿಯಾಗಿ ಸೇರಿಸಲಾಗಿತ್ತು. ಈ ಕೃತ್ಯಕ್ಕೆ ಅವರು ಕುಮ್ಮಕ್ಕು ನೀಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿತ್ತು.

ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡ ಬಳಿಕ 2026ರ ಫೆಬ್ರವರಿಯಲ್ಲಿ ಸಿಐಡಿ ಪೊಲೀಸರು ಅವರನ್ನು ಬಂಧಿಸಿದ್ದರು. ಸುಮಾರು 28 ದಿನಗಳ ಕಾಲ ನ್ಯಾಯಾಂಗ ಬಂಧನದಲ್ಲಿದ್ದ ಬಳಿಕ, 2026ರ ಮಾರ್ಚ್ 12ರಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಅವರಿಗೆ ಜಾಮೀನು ಮಂಜೂರು ಮಾಡಿತ್ತು.

ಇದೀಗ ಜಾಮೀನಿನ ಮೇಲೆ ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಮತ್ತೊಮ್ಮೆ ಹಲ್ಲೆ ಮತ್ತು ಬೆದರಿಕೆ ಪ್ರಕರಣದಲ್ಲಿ ಅವರ ಹೆಸರು ಕೇಳಿಬಂದಿರುವುದು ಶಾಸಕ ಬೈರತಿ ಬಸವರಾಜ್ ಅವರಿಗೆ ಹೊಸ ತಲೆನೋವಾಗಿ ಪರಿಣಮಿಸಿದೆ.

ಕೇರಳದಲ್ಲಿ ಯುಡಿಎಫ್ʼಗೆ ಭರ್ಜರಿ ಮುನ್ನಡೆ: ಕೋಝಿಕ್ಕೋಡ್ʼಗೆ ಧಾವಿಸಿದ ಜಮೀರ್

ತಿರುವನಂತಪುರಂ: ಕೇರಳ ವಿಧಾನಸಭಾ ಚುನಾವಣೆಯ ಮತ ಎಣಿಕೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಭರ್ಜರಿ ಮುನ್ನಡೆ ಸಾಧಿಸಿದ್ದು, ಬಹುಮತದ ಗಡಿ ದಾಟಿ ಸರ್ಕಾರ ರಚನೆಯತ್ತ ದಾಪುಗಾಲಿಟ್ಟಿದೆ. ಆರಂಭಿಕ ಫಲಿತಾಂಶಗಳ ಪ್ರಕಾರ ಯುಡಿಎಫ್ 96 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್ ಪಾಳಯದಲ್ಲಿ ಸಂಭ್ರಮ ಮನೆ ಮಾಡಿದೆ.

ಯುಡಿಎಫ್ ಸ್ಪಷ್ಟ ಮುನ್ನಡೆ ಸಾಧಿಸುತ್ತಿದ್ದಂತೆಯೇ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಸೂಚನೆ ಮೇರೆಗೆ ಸಚಿವ ಜಮೀರ್ ಅಹ್ಮದ್ ಕೇರಳದ ಕ್ಯಾಲಿಕಟ್‌ಗೆ ಆಗಮಿಸಿದ್ದಾರೆ. ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಜಮೀರ್ ಅಹ್ಮದ್ ಅವರಿಗೆ ಅದ್ದೂರಿ ಸ್ವಾಗತ ಕೋರಿದರು.

ಏಪ್ರಿಲ್ 9ರಂದು ನಡೆದಿದ್ದ ಕೇರಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ಇಂದು ನಡೆಯುತ್ತಿದ್ದು, ಆಡಳಿತಾರೂಢ ಎಡ ಪ್ರಜಾಸತ್ತಾತ್ಮಕ ರಂಗ (ಎಲ್‌ಡಿಎಫ್) ಹಿನ್ನಡೆ ಅನುಭವಿಸಿದೆ. ಲಭ್ಯವಾಗಿರುವ ಮಾಹಿತಿ ಪ್ರಕಾರ, ಯುಡಿಎಫ್ 96 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದರೆ, ಎಲ್‌ಡಿಎಫ್ 42 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಒಂದು ಕ್ಷೇತ್ರದಲ್ಲಿ ಮುನ್ನಡೆ ಪಡೆದಿದೆ.

ರಾಜ್ಯದ 140 ವಿಧಾನಸಭಾ ಕ್ಷೇತ್ರಗಳಿಗೆ ಏಪ್ರಿಲ್ 9ರಂದು ಮತದಾನ ನಡೆದಿದ್ದು, ಒಟ್ಟು 79.63 ಶೇಕಡಾ ಮತದಾನ ದಾಖಲಾಗಿತ್ತು. ಈ ಚುನಾವಣೆಯಲ್ಲಿ ಸುಮಾರು 883 ಅಭ್ಯರ್ಥಿಗಳು ಕಣಕ್ಕಿಳಿದಿದ್ದು, ಅವರಲ್ಲಿ 40 ಮಹಿಳಾ ಅಭ್ಯರ್ಥಿಗಳು ಸ್ಪರ್ಧಿಸಿದ್ದರು.

ರಾಜ್ಯದಲ್ಲಿ ಸರ್ಕಾರ ರಚಿಸಲು 71 ಸ್ಥಾನಗಳ ಅವಶ್ಯಕತೆ ಇತ್ತು. ಆದರೆ ಯುಡಿಎಫ್ ಈಗಾಗಲೇ ಬಹುಮತದ ಗಡಿ ದಾಟಿರುವುದರಿಂದ, ಕೇರಳದಲ್ಲಿ ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯುವ ಸಾಧ್ಯತೆಗಳು ಬಹುತೇಕ ಖಚಿತವಾಗಿವೆ.

ತಮಿಳುನಾಡಿನಲ್ಲಿ ದಳಪತಿ ವಿಜಯ್ʼಗೆ ಭರ್ಜರಿ ಮುನ್ನಡೆ: ಸ್ಟಾಲಿನ್ ಭದ್ರಕೋಟೆಗಳಲ್ಲೂ ಮುನ್ನಡೆ ಸಾಧಿಸಿದ TVK

ಚೆನ್ನೈ: ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ತಮಿಳುನಾಡು ವಿಧಾನಸಭಾ ಚುನಾವಣೆಯ ಮತ ಎಣಿಕೆಯಲ್ಲಿ ತ್ರಿಕೋನ ಸ್ಪರ್ಧೆ ಸ್ಪಷ್ಟವಾಗಿದ್ದು, ನಟ ದಳಪತಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಭರ್ಜರಿ ಮುನ್ನಡೆ ಸಾಧಿಸಿದೆ. ಇದೇ ಮೊದಲ ಬಾರಿಗೆ ಚುನಾವಣಾ ಅಖಾಡಕ್ಕೆ ಇಳಿದಿರುವ ಟಿವಿಕೆ, ಆರಂಭಿಕ ಹಂತದಲ್ಲೇ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮುವತ್ತ ದಾಪುಗಾಲಿಟ್ಟಿದೆ.

ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಲಭ್ಯವಾದ ಮಾಹಿತಿಯ ಪ್ರಕಾರ, ಟಿವಿಕೆ 101 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಆಡಳಿತಾರೂಢ ಡಿಎಂಕೆ 52 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ. ಇತ್ತ ಎಐಎಡಿಎಂಕೆ ಮೈತ್ರಿಕೂಟ 79 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಇತರೆ ಪಕ್ಷಗಳು ಒಂದು ಕ್ಷೇತ್ರದಲ್ಲಿ ಮುನ್ನಡೆ ದಾಖಲಿಸಿವೆ.

ಈ ಬಾರಿ ಆಡಳಿತಾರೂಢ ಡಿಎಂಕೆಗೆ ಭಾರೀ ಹಿನ್ನಡೆ ಎದುರಾಗಿರುವುದು ಗಮನ ಸೆಳೆದಿದೆ. ಡಿಎಂಕೆಯ ಭದ್ರಕೋಟೆ ಎಂದು ಪರಿಗಣಿಸಲಾದ ಉದಯನಿಧಿ ಸ್ಟಾಲಿನ್ ಪ್ರತಿನಿಧಿಸುವ ಚೆಪಾಕ್-ತಿರುವಲ್ಲಿಕೇಣಿ ಕ್ಷೇತ್ರ ಹಾಗೂ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಪ್ರತಿನಿಧಿಸುವ ಕೊಳತ್ತೂರು ಕ್ಷೇತ್ರದಲ್ಲೂ ಟಿವಿಕೆ ಮುನ್ನಡೆ ಸಾಧಿಸಿರುವುದು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.

ಇನ್ನೊಂದೆಡೆ, ತಿರುಚಿ ಪೂರ್ವ ಮತ್ತು ಪೆರಂಬೂರು ಕ್ಷೇತ್ರಗಳಲ್ಲಿಯೂ ವಿಜಯ್ ಪಕ್ಷ ಮುನ್ನಡೆ ಕಾಯ್ದುಕೊಂಡಿದೆ. ಆರಂಭಿಕ ಮತ ಎಣಿಕೆ ಪ್ರಕಾರ ಟಿವಿಕೆ 100 ಸ್ಥಾನಗಳ ಗಡಿ ದಾಟಿದ್ದು, ಬಹುಮತಕ್ಕೆ ಅಗತ್ಯವಿರುವ 118 ಸ್ಥಾನಗಳತ್ತ ಮುನ್ನಡೆಯುತ್ತಿದೆ.

ಪ್ರಸ್ತುತ ಎಐಎಡಿಎಂಕೆ ಎರಡನೇ ಸ್ಥಾನದಲ್ಲಿದ್ದು, ಡಿಎಂಕೆ ಮೂರನೇ ಸ್ಥಾನಕ್ಕೆ ಕುಸಿದಿದೆ. ಇದೇ ಪರಿಸ್ಥಿತಿ ಮುಂದುವರಿದಲ್ಲಿ ರಾಜ್ಯದಲ್ಲಿ ಅತಂತ್ರ ವಿಧಾನಸಭೆ ನಿರ್ಮಾಣವಾಗುವ ಸಾಧ್ಯತೆ ಇದ್ದು, ಸಮ್ಮಿಶ್ರ ಸರ್ಕಾರ ರಚನೆಗೆ ವೇದಿಕೆ ಸಿದ್ಧವಾಗುವ ಸಾಧ್ಯತೆಗಳಿವೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

ತೋಂಟದಾರ್ಯ ಮಠದ ಜಾತ್ರೆ ಅವಘಡ: ಕಾರಣರಾದವರ ಬಂಧನಕ್ಕೆ ಆಗ್ರಹ

ಗದಗ: ತೋಂಟದಾರ್ಯ ಮಠದ ಜಾತ್ರೆಯಲ್ಲಿ ಸಂಭವಿಸಿದ ದುರ್ಘಟನೆ ಅತ್ಯಂತ ದುಃಖಕರವಾಗಿದ್ದು, ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸಂಪೂರ್ಣ ತನಿಖೆ ನಡೆಸಬೇಕು ಎಂದು ಅಖಿಲ ಕರ್ನಾಟಕ ಜನಶಕ್ತಿ ವೇದಿಕೆಯ ರಾಜ್ಯಾಧ್ಯಕ್ಷರಾದ ಸೈಯದ್ ಖಾಲಿದ್ ಕೊಪ್ಪಳ ಆಗ್ರಹಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಜಾತ್ರೆಯ ಆಟದ ಮಾಲೀಕರನ್ನು ತಕ್ಷಣ ಬಂಧಿಸಬೇಕು. ಜೊತೆಗೆ, ಗಾಯಗೊಂಡವರಿಗೆ ಸಮರ್ಪಕ ಪರಿಹಾರ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಈ ದುರ್ಘಟನೆಯ ಹಿಂದೆ ಯಾರ ಕೈವಾಡವಿದೆ ಎಂಬುದನ್ನು ಪತ್ತೆಹಚ್ಚಲು ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಸಮಗ್ರ ತನಿಖೆ ನಡೆಸಬೇಕು ಎಂದು ತಿಳಿಸಿದ್ದಾರೆ.

ಇದಲ್ಲದೆ, ಶ್ರೀ ತೋಂಟದ ಮಹಾ ಸಿದ್ಧಲಿಂಗ ಸ್ವಾಮಿಗಳ ಮಠದೊಂದಿಗೆ ಸಂಪೂರ್ಣ ಬೆಂಬಲವಾಗಿ ತಾವು ನಿಂತಿರುವುದಾಗಿ ಸೈಯದ್ ಖಾಲಿದ್ ಕೊಪ್ಪಳ ಅವರು ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.

ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌ ದಾಖಲು

ಬೆಂಗಳೂರು: ಡಾ. ರಾಜ್‌ಕುಮಾರ್ ಸಮಾಧಿ ಜಾಗದ ವಿವಾದ ಇದೀಗ ಕಾನೂನು ಹಂತ ತಲುಪಿದೆ. ನಟ ಚೇತನ್ ಅಹಿಂಸಾ ನೀಡಿದ ದೂರಿನ ಆಧಾರದ ಮೇಲೆ ನಿರ್ಮಾಪಕ ಸಾ.ರಾ ಗೋವಿಂದು ಸೇರಿದಂತೆ ಹಲವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ದಾಖಲಾದ ಈ ಪ್ರಕರಣದಲ್ಲಿ ಬೆದರಿಕೆ, ಮನೆ ಮುಂದೆ ಗಲಾಟೆ ಹಾಗೂ ಅವಾಚ್ಯ ಶಬ್ದಗಳಿಂದ ನಿಂದನೆ ಆರೋಪಗಳು ಸೇರಿವೆ.

ಚೇತನ್ ಅವರ ಪ್ರಕಾರ, ಸಾಮಾಜಿಕ ಜಾಲತಾಣದ ಪೋಸ್ಟ್ ಪ್ರಶ್ನಿಸಿ ಕೆಲವರು ಮನೆಗೆ ನುಗ್ಗಿ ಗಲಾಟೆ ನಡೆಸಿದ್ದಾರೆ. “ಸಾ.ರಾ ಗೋವಿಂದು ಅವರ ನಡೆ ದುರಹಂಕಾರ ಹಾಗೂ ಗೂಂಡಾಗಿರಿ ತೋರಿಸುತ್ತದೆ” ಎಂದು ಅವರು ಆರೋಪಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಹಲವು ಸಂಘಟನೆಗಳು ಸೇರಿ ದಾಖಲೆ ಸಮೇತ ದೂರು ಸಲ್ಲಿಸಿರುವುದಾಗಿ ಚೇತನ್ ತಿಳಿಸಿದ್ದಾರೆ.

ಘಟನೆ ಇದೀಗ ಸಿನಿ ವಲಯದ ವಿವಾದವನ್ನು ಕಾನೂನು ಹೋರಾಟದ ಹಂತಕ್ಕೆ ತಳ್ಳಿದ್ದು, ಮುಂದಿನ ಬೆಳವಣಿಗೆಗಳತ್ತ ಎಲ್ಲರ ಗಮನ ಕೇಂದ್ರೀಕೃತವಾಗಿದೆ.

error: Content is protected !!