Home Blog

ದಲಿತರ ಸಮಸ್ಯೆಗಳಿಗೆ ಶೀಘ್ರ ನ್ಯಾಯ ಒದಗಿಸಿ

0

ವಿಜಯಸಾಕ್ಷಿ ಸುದ್ದಿ, ಗದಗ: ಗದಗ ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ದಲಿತರ ಮೇಲಿನ ದೌರ್ಜನ್ಯ, ಅಸ್ಪೃಶ್ಯತೆ ಸೇರಿದಂತೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳಿಗೆ ಸೂಕ್ತ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿ ಜೈ ಭೀಮ್ ಸಂಘರ್ಷ ಸಮಿತಿ ಗದಗ ಜಿಲ್ಲಾ ಘಟಕದ ವತಿಯಿಂದ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರಿಗೆ ಮನವಿ ಸಲ್ಲಿಸಲಾಯಿತು.

ಮನವಿ ಸಲ್ಲಿಸಿದ ಬಳಿಕ ಮಾತನಾಡಿದ ಜಿಲ್ಲಾ ಘಟಕದ ಅಧ್ಯಕ್ಷ ಗಣೇಶ ವಾಯ್. ಹುಬ್ಬಳ್ಳಿ, ಗದಗ ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ದಲಿತರ ಮೇಲಿನ ದೌರ್ಜನ್ಯ ಹಾಗೂ ಅಸ್ಪೃಶ್ಯತೆ ಇನ್ನೂ ಜೀವಂತವಾಗಿರುವುದು ಆತಂಕಕಾರಿ ಸಂಗತಿಯಾಗಿದೆ. ಇದರ ಜೊತೆಗೆ ವಿದ್ಯಾರ್ಥಿಗಳ ವಿದ್ಯಾರ್ಥಿವೇತನ ಸಮಸ್ಯೆ, ಪೌರ ಕಾರ್ಮಿಕರ ಸಮಸ್ಯೆ, ಹೊರಗುತ್ತಿಗೆ ನೌಕರರನ್ನು ಖಾಯಂಗೊಳಿಸುವುದು, ದೇವದಾಸಿಯರ ಸಮಸ್ಯೆ ಸೇರಿದಂತೆ ರಾಜ್ಯದಾದ್ಯಂತ ದಲಿತ ಸಮುದಾಯ ಎದುರಿಸುತ್ತಿರುವ ಹಲವು ಸಮಸ್ಯೆಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಪರಿಹಾರ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಮನವಿಯಲ್ಲಿ ಎಸ್‌.ಸಿ./ಎಸ್‌.ಟಿ. ಸಮುದಾಯದ ಸಮಸ್ಯೆಗಳ ಕುರಿತು ಸಮಗ್ರ ಪರಿಶೀಲನೆ ನಡೆಸಿ, ಸಂತ್ರಸ್ತರಿಗೆ ನ್ಯಾಯ ದೊರಕುವಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ರಾಜ್ಯ ಮಹಿಳಾ ಆಯೋಗವನ್ನು ಆಗ್ರಹಿಸಲಾಯಿತು.

ಈ ಸಂದರ್ಭದಲ್ಲಿ ಜೈ ಭೀಮ್ ಸಂಘರ್ಷ ಸಮಿತಿಯ ಉಪಾಧ್ಯಕ್ಷ ಮಂಜುನಾಥ ಎಫ್. ತೌಜಲ್, ರೋಣ ತಾಲೂಕು ಅಧ್ಯಕ್ಷ ಬಸವರಾಜ ಬದಾಮಿ, ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ರಾಷ್ಟ್ರೀನ್ ಜೋಸೆಪ್, ಉಪಾಧ್ಯಕ್ಷ ರಾಜೇಶ ವಿ. ಶೆಟ್ಟರ್, ಯುವ ಘಟಕದ ಜಿಲ್ಲಾಧ್ಯಕ್ಷ ಇಮಾಮಹುಸೇನ ಕುನ್ನಿಬಾವಿ, ಕಾರ್ಯದರ್ಶಿ ಸಮೀರ ಅಹ್ಮದ್ ಕುನ್ನಿಬಾವಿ, ಬಾಬು ಬಳ್ಳಾರಿ, ಮಂಜುನಾಥ ಸಂದಿಮನಿ, ಯುವ ಘಟಕದ ಅಧ್ಯಕ್ಷ ಪ್ರೇಮಕುಮಾರ ಹುಬ್ಬಳ್ಳಿ, ಮಂಜುನಾಥ ಸುಂಕದ, ಶ್ರೀಕಾಂತ ಹಲವಾಗಲಿ, ಹೇಮಂತ ಹುಬ್ಬಳ್ಳಿ, ವಿರುಪಾಕ್ಷ ಗೌಡರ, ಗಿರೀಶ ಚಳಗೇರಿ, ರಫೀಕ ನವಲಗುಂದ, ಫರದೀನ ಕಾಟಾಪುರ, ಮಲ್ಲೇಶ ಮೇಳದಾಳಮಠ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಮಾಜಿ ಸಚಿವ ಮುರುಗೇಶ ನಿರಾಣಿಗೆ ಸನ್ಮಾನ

0

ವಿಜಯಸಾಕ್ಷಿ ಸುದ್ದಿ, ಗದಗ: ವಿಜಯ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘದ 73ನೇ ನೂತನ ಶಾಖೆಯ ಉದ್ಘಾಟನಾ ಕಾರ್ಯಕ್ರಮಕ್ಕೆ ಗದಗ ನಗರಕ್ಕೆ ಆಗಮಿಸಿದ್ದ ಮಾಜಿ ಸಚಿವ ಮುರುಗೇಶ ನಿರಾಣಿ ಅವರಿಗೆ ಕಂಬಳಿ ಹೊದಿಸಿ ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಗದಗ ಜಿಲ್ಲಾ ಬಿಜೆಪಿ ಪ್ರಕೊಷ್ಠಗಳ ಸಹ ಸಂಯೋಜಕ ರಮೇಶ ಎನ್. ಸಜ್ಜಗಾರ, ಕುರುಬ ಸಮಾಜದ ಮುಖಂಡ ಶಿವು ಡಂಬಳ, ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಸಿದ್ದಣ್ಣ ಪಲ್ಲೇದ, ನಿಗಮ ಮಂಡಳಿ ಮಾಜಿ ಅಧ್ಯಕ್ಷ ಎಂ.ಎಸ್. ಕರಿಗೌಡ್ರ, ಬಿಜೆಪಿ ಗದಗ ಜಿಲ್ಲಾ ಅಧ್ಯಕ್ಷ ರಾಜು ಕುರುಡಗಿ, ಬಿಜೆಪಿ ಮುಖಂಡ ಭೀಮಸಿಂಗ್ ರಾಠೋಡ, ಬಿಜೆಪಿ ನಗರ ಮಂಡಲ ಅಧ್ಯಕ್ಷ ಸುರೇಶ ಮರಳಪ್ಪನವರ, ನಿವೃತ್ತ ಶಿಕ್ಷಕರಾದ ಚಂದ್ರಶೇಖರ ಜೋರಗಸ್ತಿ, ಗುಡದಪ್ಪ ಹಂಚಿನಾಳ, ಆನಂದ ಬೋಸಗಿ, ಮಂಜುನಾಥ ಶಾಂತಗೇರಿ, ರವಿ ಮಾನ್ವಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಉದ್ಯಮಿಗಳಿಗೆ ಕರ್ನಾಟಕದಲ್ಲಿ ಪ್ರೋತ್ಸಾಹವೇ ಇಲ್ಲ: ಮುರುಗೇಶ ನಿರಾಣಿ

0

ವಿಜಯಸಾಕ್ಷಿ ಸುದ್ದಿ, ಗದಗ: ಕರ್ನಾಟಕದಲ್ಲಿ ಗೋವಿನಜೋಳ ಆಧಾರಿತ ₹6 ಸಾವಿರ ಕೋಟಿ ವೆಚ್ಚದ ಇಥೆನಾಲ್ ಉತ್ಪಾದನಾ ಘಟಕ ಸ್ಥಾಪಿಸಲು ಉದ್ದೇಶಿಸಲಾಗಿತ್ತು. ಆದರೆ ರಾಜ್ಯ ಸರ್ಕಾರ ಅನುಮತಿ ನೀಡದ ಹಿನ್ನೆಲೆಯಲ್ಲಿ ಯೋಜನೆಯನ್ನು ಮಹಾರಾಷ್ಟ್ರ ಮತ್ತು ಆಂಧ್ರಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ ಎಂದು ಮಾಜಿ ಸಚಿವ ಮುರುಗೇಶ ನಿರಾಣಿ ಆರೋಪಿಸಿದರು.

ನಗರದ ರೋಟರಿ ವೃತ್ತದ ಮಾನ್ವಿ ಕಟ್ಟಡದಲ್ಲಿ ವಿಜಯ ಎಂಆರ್‌ಎನ್ ಸೌಹಾರ್ದ ಕ್ರೆಡಿಟ್ ಸಹಕಾರ ಸಂಘ ನಿಯಮಿತದ 73ನೇ ಶಾಖೆ ಉದ್ಘಾಟನೆ ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಕರ್ನಾಟಕದಲ್ಲಿ ಕೈಗಾರಿಕೆ ಸ್ಥಾಪಿಸಲು ಉದ್ಯಮಿಗಳಿಗೆ ಅಗತ್ಯ ಬೆಂಬಲ ಮತ್ತು ಪ್ರೋತ್ಸಾಹ ದೊರೆಯುತ್ತಿಲ್ಲ. ಇದೇ ಕಾರಣಕ್ಕೆ ಇತರೆ ರಾಜ್ಯಗಳು ಭೂಮಿ, ಸಬ್ಸಿಡಿ ಸೇರಿದಂತೆ ವಿವಿಧ ಸೌಲಭ್ಯಗಳನ್ನು ನೀಡಿ ಬಂಡವಾಳ ಹೂಡಿಕೆಗಳನ್ನು ಸೆಳೆಯುತ್ತಿವೆ. ಪರಿಣಾಮ ರಾಜ್ಯದ ರೈತರು ಮತ್ತು ಯುವಕರಿಗೆ ದೊರೆಯಬೇಕಿದ್ದ ಉದ್ಯೋಗಾವಕಾಶಗಳು ಹೊರರಾಜ್ಯಗಳಿಗೆ ವರ್ಗವಾಗುತ್ತಿವೆ ಎಂದು ಹೇಳಿದರು.

ರಾಜ್ಯ ಸರ್ಕಾರ ವಿದೇಶಿ ಉದ್ಯಮಿಗಳನ್ನು ಆಹ್ವಾನಿಸಲು ಕೋಟ್ಯಂತರ ರೂಪಾಯಿ ವೆಚ್ಚ ಮಾಡುತ್ತಿದೆ. ಆದರೆ ಕನ್ನಡಿಗ ಉದ್ಯಮಿಗಳಿಗೆ ಸೂಕ್ತ ಅವಕಾಶ ಕಲ್ಪಿಸುತ್ತಿಲ್ಲ ಎಂದು ಅವರು ಟೀಕಿಸಿದರು.

ನಿರಾಣಿ ಗ್ರೂಪ್ ದೇಶದ ಅಗ್ರ ಸಕ್ಕರೆ ಉತ್ಪಾದನಾ ಸಂಸ್ಥೆಗಳಲ್ಲಿ ಒಂದಾಗಿದ್ದು, ಪ್ರತಿದಿನ 30 ಲಕ್ಷ ಲೀಟರ್ ಇಥೆನಾಲ್ ಹಾಗೂ 400 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸುತ್ತಿದೆ. ಗ್ರೀನ್ ಹೈಡ್ರೋಜನ್, ಕಂಪ್ರೆಸ್ಡ್ ಬಯೋ ಗ್ಯಾಸ್ (ಸಿಬಿಜಿ), ಶಿಕ್ಷಣ, ಸಿಮೆಂಟ್ ಹಾಗೂ ಬ್ಯಾಂಕಿಂಗ್ ಕ್ಷೇತ್ರಗಳಲ್ಲೂ ಕಾರ್ಯನಿರ್ವಹಿಸುತ್ತಿದ್ದು, ಬಿಹಾರದಲ್ಲಿ ಸಾವಿರಾರು ಕೋಟಿ ರೂಪಾಯಿ ವೆಚ್ಚದ ಹೊಸ ಯೋಜನೆಗೆ ಸರ್ಕಾರದಿಂದ ಉತ್ತಮ ಪ್ರೋತ್ಸಾಹ ದೊರೆಯುತ್ತಿದೆ ಎಂದರು.

ಮೆಕ್ಕೆಜೋಳ, ಕಬ್ಬು ಹಾಗೂ ಅಕ್ಕಿಯಿಂದ ಇಥೆನಾಲ್ ಉತ್ಪಾದನೆಯಿಂದ ರೈತರಿಗೆ ಉತ್ತಮ ಬೆಲೆ ದೊರೆಯಲಿದೆ. ಅದರ ಉಪ ಉತ್ಪನ್ನ ಜಾನುವಾರುಗಳಿಗೆ ಗುಣಮಟ್ಟದ ಆಹಾರವಾಗಲಿದ್ದು, ಹಾಲಿನ ಉತ್ಪಾದನೆಯೂ ಹೆಚ್ಚಲಿದೆ. ಇಥೆನಾಲ್ ಮಿಶ್ರಿತ ಇಂಧನದಿಂದ ಕಚ್ಚಾ ತೈಲ ಆಮದು ವೆಚ್ಚ ಕಡಿಮೆಯಾಗುವುದರೊಂದಿಗೆ ದೇಶದ ಆರ್ಥಿಕತೆಗೆ ಲಾಭವಾಗಲಿದೆ ಎಂದು ಹೇಳಿದರು.

ಬರ ಪರಿಸ್ಥಿತಿ: ಸಾಲ ಮನ್ನಾಗೆ ಆಗ್ರಹ

ರಾಜ್ಯದಲ್ಲಿ ಮಳೆ ಕೊರತೆಯಿಂದ ರೈತರು ಸಂಕಷ್ಟದಲ್ಲಿದ್ದಾರೆ. ಬೆಳೆಗಳು ಹಾನಿಗೀಡಾಗಿದ್ದು, ಅನೇಕ ಕಡೆ ಕೃಷಿ ಭೂಮಿಯೇ ಖಾಲಿ ಉಳಿದಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ರೈತರ ಸಾಲ ಮನ್ನಾ ಮಾಡಿ ನೆರವಿಗೆ ಬರಬೇಕು ಎಂದು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಶಾಸಕ ಸಿ.ಸಿ. ಪಾಟೀಲ, ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರು, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ರಾಜು ಕುರಡಗಿ, ಬಿಜೆಪಿ ಮುಖಂಡರಾದ ಎಂ.ಎಸ್. ಕರಿಗೌಡ್ರ, ವಿಜಯಕುಮಾರ್ ಗಡ್ಡಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

“ಕರ್ನಾಟಕದಲ್ಲಿ ಅನುಮತಿ ಸಿಗದ ಕಾರಣ ₹6 ಸಾವಿರ ಕೋಟಿ ಇಥೆನಾಲ್ ಯೋಜನೆಯನ್ನು ಮಹಾರಾಷ್ಟ್ರ ಮತ್ತು ಆಂಧ್ರಪ್ರದೇಶಕ್ಕೆ ಸ್ಥಳಾಂತರಿಸಿದ್ದೇವೆ. ರಾಜ್ಯ ಸರ್ಕಾರ ಸ್ಥಳೀಯ ಉದ್ಯಮಿಗಳಿಗೂ ಸಮಾನ ಪ್ರೋತ್ಸಾಹ ನೀಡಬೇಕು.”

– ಮುರುಗೇಶ ನಿರಾಣಿ, ಮಾಜಿ ಸಚಿವ

2028ರಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ

2028ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಪಕ್ಷ ಸಂಘಟನೆ ನಡೆಯುತ್ತಿದೆ. ಪಕ್ಷದ ರಾಜ್ಯಾಧ್ಯಕ್ಷರು ಯಾರೇ ಆಗಿದ್ದರೂ ಅವರ ನೇತೃತ್ವದಲ್ಲಿ ಕಾರ್ಯನಿರ್ವಹಿಸಲಾಗುವುದು. ಕೆ.ಎಸ್. ಈಶ್ವರಪ್ಪ ಹಾಗೂ ಬಸನಗೌಡ ಪಾಟೀಲ ಯತ್ನಾಳ್ ಪಕ್ಷದ ಮುಖ್ಯವಾಹಿನಿಗೆ ಬಂದರೆ ಬಿಜೆಪಿಗೆ ಮತ್ತಷ್ಟು ಬಲ ಬರಲಿದೆ. ಕಾಂಗ್ರೆಸ್‌ನ ಅಸಮಾಧಾನಿತ ಶಾಸಕರೂ ಮುಂದಿನ ದಿನಗಳಲ್ಲಿ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮಹಿಳೆಯರ ಸಮಸ್ಯೆಗೆ ತ್ವರಿತ ಸ್ಪಂದನೆಗೆ ಸೂಚನೆ

0

ವಿಜಯಸಾಕ್ಷಿ ಸುದ್ದಿ, ಗದಗ: ಮಹಿಳೆಯರ ಸಮಸ್ಯೆಗಳಿಗೆ ಅಧಿಕಾರಿಗಳು ಮಾನವೀಯ ದೃಷ್ಟಿಕೋನದಿಂದ ಸ್ಪಂದಿಸಿ, ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ಫಲಾನುಭವಿಗಳಿಗೆ ತ್ವರಿತವಾಗಿ ತಲುಪಿಸುವಲ್ಲಿ ಹೆಚ್ಚಿನ ಆಸಕ್ತಿಯಿಂದ ಕಾರ್ಯನಿರ್ವಹಿಸಬೇಕು ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಸೂಚಿಸಿದರು.

ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಶನಿವಾರ ನಡೆದ ಮಹಿಳಾ ಸ್ಪಂದನಾ ಸಭೆ ಹಾಗೂ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಿವಿಧ ಇಲಾಖೆಗಳ ವಸತಿ ನಿಲಯಗಳಲ್ಲಿ ಮೂಲಭೂತ ಸೌಲಭ್ಯಗಳನ್ನು ಸಮರ್ಪಕವಾಗಿ ಕಲ್ಪಿಸಬೇಕು ಎಂದು ಹೇಳಿದರು.

ವಿಧವಾ ವೇತನ, ವೃದ್ಧಾಪ್ಯ ವೇತನ ಸೇರಿದಂತೆ ಸಾಮಾಜಿಕ ಭದ್ರತಾ ಯೋಜನೆಗಳ ಸೌಲಭ್ಯಗಳನ್ನು ಫಲಾನುಭವಿಗಳಿಗೆ ಯಾವುದೇ ವಿಳಂಬವಿಲ್ಲದೆ ತಲುಪಿಸಬೇಕು. ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಸುರಕ್ಷಿತ ವಾತಾವರಣ ಒದಗಿಸುವುದು ಇಲಾಖೆಯ ಜವಾಬ್ದಾರಿಯಾಗಿದ್ದು, ವಿದ್ಯಾರ್ಥಿಗಳ ಚಲನವಲನದ ಬಗ್ಗೆ ವಾರ್ಡನ್‌ಗಳು ಕಟ್ಟುನಿಟ್ಟಿನ ನಿಗಾ ವಹಿಸಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಆಧಾರ್ ನವೀಕರಣ, ಪಡಿತರ ಚೀಟಿ, ಬಡ ಮಹಿಳೆಯರಿಗೆ ಮನೆ, ವಿಧವಾ ವೇತನ, ವೃದ್ಧಾಪ್ಯ ವೇತನ ಸೇರಿದಂತೆ ವಿವಿಧ ಸಮಸ್ಯೆಗಳ ಕುರಿತು ಸಾರ್ವಜನಿಕರಿಂದ ಅರ್ಜಿಗಳನ್ನು ಸ್ವೀಕರಿಸಿದ ಡಾ. ನಾಗಲಕ್ಷ್ಮಿ ಚೌಧರಿ, ಅವುಗಳ ಶೀಘ್ರ ವಿಲೇವಾರಿಗೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿ, ಸಂಬಂಧಿಸಿದ ಅಧಿಕಾರಿಗಳಿಗೆ ಅಗತ್ಯ ನಿರ್ದೇಶನ ನೀಡಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಕುಲಪತಿ ಡಾ. ಸುರೇಶ ನಾಡಗೌಡ್ರ, ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಕಾರ್ಯದರ್ಶಿ ರೂಪಾ, ಡಿವೈಎಸ್‌ಪಿ ಮುರ್ತುಜಾ ಖಾದ್ರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ರಾಧಾ ಮಣ್ಣೂರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್.ಎಸ್. ನೀಲಗುಂದ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಡಾ. ನಂದಾ ಹಣಬರಟ್ಟಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಎಂ.ಎನ್. ತುಂಬರಮಟ್ಟಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

“ಮಹಿಳೆಯರ ಸಮಸ್ಯೆಗಳಿಗೆ ಅಧಿಕಾರಿಗಳು ತ್ವರಿತವಾಗಿ ಸ್ಪಂದಿಸಬೇಕು. ಸರ್ಕಾರದ ಯೋಜನೆಗಳ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ವಿಳಂಬವಿಲ್ಲದೆ ತಲುಪಬೇಕು.”

– ಡಾ. ನಾಗಲಕ್ಷ್ಮಿ ಚೌಧರಿ, ಅಧ್ಯಕ್ಷೆ, ಕರ್ನಾಟಕ ರಾಜ್ಯ ಮಹಿಳಾ ಆಯೋಗ

ವ್ಯಸನದಿಂದ ದೂರವಿದ್ದರೆ ದೇಶದ ಭವಿಷ್ಯ ಭದ್ರ: ಎಸ್.ವಿ. ಸಂಕನೂರ

0

ವಿಜಯಸಾಕ್ಷಿ ಸುದ್ದಿ, ಗದಗ: ಯುವಜನತೆ ಸ್ವಯಂ ಪ್ರೇರಣೆಯಿಂದ ದುಶ್ಚಟಗಳಿಂದ ದೂರವಿದ್ದು, ವ್ಯಸನಮುಕ್ತ ಸಮಾಜ ಹಾಗೂ ನಶಾಮುಕ್ತ ಭಾರತ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ ಕರೆ ನೀಡಿದರು.

ಬೆಟಗೇರಿಯ ಆದರ್ಶ ಶಿಕ್ಷಣ ಸಮಿತಿಯ ಸುವರ್ಣ ಮಹೋತ್ಸವ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಆದರ್ಶ ಶಿಕ್ಷಣ ಸಮಿತಿಯ ಶ್ರೀ ಡಿ.ಎಸ್. ಕುರ್ತಕೋಟಿ ಮೆಮೋರಿಯಲ್ ಪಿಯು ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ಶ್ರೀ ಮ.ನಿ.ಪ್ರ. ಡಾ. ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆಯ ಅಂಗವಾಗಿ ಆಯೋಜಿಸಿದ್ದ ‘ವ್ಯಸನ ಮುಕ್ತ ದಿನಾಚರಣೆ–2026’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಆಗಸ್ಟ್ 1ರಂದು ಜನಿಸಿದ ಪರಮಪೂಜ್ಯ ಮಹಾಂತ ಶಿವಯೋಗಿಗಳು 1975ರಿಂದ ಸುಮಾರು 42 ವರ್ಷಗಳ ಕಾಲ ‘ಮಹಾಂತ ಜೋಳಿಗೆ’ ಅಭಿಯಾನದ ಮೂಲಕ ಮನೆ ಮನೆಗೆ ತೆರಳಿ ಸಿಗರೇಟ್, ತಂಬಾಕು, ಮದ್ಯಪಾನದಂತಹ ದುಶ್ಚಟಗಳನ್ನು ತ್ಯಜಿಸುವಂತೆ ಜನರಲ್ಲಿ ಜಾಗೃತಿ ಮೂಡಿಸಿದರು. ಅವರ ಸೇವೆಯನ್ನು ಸ್ಮರಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಪ್ರತಿವರ್ಷ ಆಗಸ್ಟ್ 1ರಂದು ವ್ಯಸನ ಮುಕ್ತ ದಿನಾಚರಣೆಯನ್ನು ಆಚರಿಸುತ್ತಿದೆ ಎಂದು ತಿಳಿಸಿದರು.

ಇಂದು ಅನೇಕ ಯುವಕರು ಮದ್ಯಪಾನ, ಧೂಮಪಾನ, ತಂಬಾಕು ಹಾಗೂ ಮಾದಕ ದ್ರವ್ಯಗಳ ವ್ಯಸನಕ್ಕೆ ಬಲಿಯಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಧೂಮಪಾನ ಶ್ವಾಸಕೋಶ, ಮದ್ಯಪಾನ ಯಕೃತ್ತು ಹಾಗೂ ಮಾದಕ ದ್ರವ್ಯಗಳು ನರಮಂಡಲವನ್ನು ಹಾನಿಗೊಳಿಸಿ ಕುಟುಂಬ ಮತ್ತು ಸಮಾಜದ ನೆಮ್ಮದಿಯನ್ನು ಹಾಳು ಮಾಡುತ್ತಿವೆ ಎಂದು ಹೇಳಿದರು.

ಕೆ.ಎಚ್. ಪಾಟೀಲ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಮನೋವಿಜ್ಞಾನ ಸಹ ಪ್ರಾಧ್ಯಾಪಕ ಡಾ. ಫಕೀರಪ್ಪ ಗಾಣಿಗೇರ ಉಪನ್ಯಾಸ ನೀಡಿ, ಮಾದಕ ವ್ಯಸನವು ಕೇವಲ ದುಶ್ಚಟವಲ್ಲ, ಅದು ಮೆದುಳಿನಲ್ಲಿ ಉಂಟಾಗುವ ಜೈವಿಕ ಹಾಗೂ ರಾಸಾಯನಿಕ ಬದಲಾವಣೆಗಳಿಂದ ಉಂಟಾಗುವ ಕಾಯಿಲೆಯಾಗಿದೆ ಎಂದು ವಿವರಿಸಿದರು.

ದೇಶದಲ್ಲಿ ಸುಮಾರು 16 ಕೋಟಿ ಜನರು ಮದ್ಯಪಾನ ಸಂಬಂಧಿತ ಸಮಸ್ಯೆಗಳಿಂದ ಬಳಲುತ್ತಿದ್ದು, 6 ಕೋಟಿ ಜನ ತೀವ್ರ ವ್ಯಸನಕ್ಕೆ ಒಳಗಾಗಿದ್ದಾರೆ. ಗಾಂಜಾ, ಒಪಿಯಾಯ್ಡ್‌ಗಳು ಹಾಗೂ ಇತರ ಮಾದಕ ವಸ್ತುಗಳ ಬಳಕೆಯಿಂದ ಲಕ್ಷಾಂತರ ಜನರು ದೈಹಿಕ ಮತ್ತು ಮಾನಸಿಕ ಸಮಸ್ಯೆಗಳಿಗೆ ತುತ್ತಾಗುತ್ತಿದ್ದಾರೆ. ಇತ್ತೀಚೆಗೆ 10 ರಿಂದ 15 ವರ್ಷದ ಮಕ್ಕಳೂ ವೈಟ್ನರ್, ಪೇಂಟ್ ಥಿನ್ನರ್, ಪೆಟ್ರೋಲ್ ವಾಸನೆ ಸೇರಿದಂತೆ ಅಪಾಯಕಾರಿ ವಸ್ತುಗಳ ಮೂಲಕ ವ್ಯಸನಕ್ಕೆ ಒಳಗಾಗುತ್ತಿರುವುದು ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಹೇಳಿದರು.

ಆರಂಭಿಕ ಹಂತದಲ್ಲಿಯೇ ವ್ಯಸನದ ಲಕ್ಷಣಗಳನ್ನು ಗುರುತಿಸಿ ಸೂಕ್ತ ವೈದ್ಯಕೀಯ ಚಿಕಿತ್ಸೆ ಹಾಗೂ ಕೌನ್ಸೆಲಿಂಗ್ ನೀಡಿದರೆ ಅನೇಕ ಜೀವಗಳನ್ನು ಉಳಿಸಬಹುದು. ಯಾರಿಗಾದರೂ ವ್ಯಸನದ ಸಮಸ್ಯೆ ಇದ್ದರೆ ಸರ್ಕಾರಿ ಉಚಿತ ಸಹಾಯವಾಣಿ ‘ಟೆಲಿ-ಮಾನಸ’ ಮೂಲಕವೂ ನೆರವು ಪಡೆಯಬಹುದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ್ ಬಬರ್ಚಿ, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ, ಆದರ್ಶ ಶಿಕ್ಷಣ ಸಮಿತಿಯ ಕಾರ್ಯದರ್ಶಿ ಎ.ಡಿ. ಗೋಡಕಿಂಡಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ವಸಂತ ಬಿ. ಮಡ್ಲೂರ, ಬೆಟಗೇರಿ ಪೊಲೀಸ್ ಠಾಣೆಯ ಪಿಎಸ್‌ಐ ಲಕ್ಷ್ಮಣ ಅರಿ, ಪ್ರಾಧ್ಯಾಪಕ ಬಾಹುಬಲಿ ಜೈನ, ಕಾಲೇಜಿನ ಪ್ರಾಂಶುಪಾಲ ಆರ್.ಆರ್. ಕುಲಕರ್ಣಿ, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ವ್ಯಸನ ಮುಕ್ತ ದಿನಾಚರಣೆಯ ಪ್ರತಿಜ್ಞಾವಿಧಿ ಬೋಧಿಸಲಾಯಿತು. ರಾಜ್ಯ ಪ್ರಶಸ್ತಿ ವಿಜೇತ ಜನಪದ ಕಲಾವಿದ ವೀರಣ್ಣ ಅಂಗಡಿ ದುಶ್ಚಟಗಳ ದುಷ್ಪರಿಣಾಮ ಕುರಿತು ಸ್ವರಚಿತ ಗೀತೆ ಪ್ರಸ್ತುತಪಡಿಸಿದರು. ವಿದ್ಯಾರ್ಥಿಗಳಿಂದ ವ್ಯಸನ ವಿರೋಧಿ ಕಿರು ನಾಟಕವೂ ಪ್ರದರ್ಶನಗೊಂಡಿತು.

“ಡ್ರಗ್ಸ್‌ಗೆ ‘ನೋ’ ಹೇಳಿ… ಬದುಕಿಗೆ ‘ಯೆಸ್’ ಹೇಳಿ. ಯುವಜನತೆ ವ್ಯಸನದಿಂದ ದೂರವಿದ್ದಾಗ ಮಾತ್ರ ಆರೋಗ್ಯವಂತ ಸಮಾಜ ಮತ್ತು ಬಲಿಷ್ಠ ರಾಷ್ಟ್ರ ನಿರ್ಮಾಣ ಸಾಧ್ಯ.”

– ಎಸ್.ವಿ. ಸಂಕನೂರ, ವಿಧಾನ ಪರಿಷತ್ ಸದಸ್ಯ

30 ವರ್ಷ ಕಳೆದರೂ ಮೂಲಸೌಲಭ್ಯ ಇಲ್ಲ..!

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಸುಮಾರು 30 ವರ್ಷಗಳ ಹಿಂದೆ ನಿರ್ಮಾಣಗೊಂಡಿರುವ ಲಕ್ಷ್ಮೇಶ್ವರದ ಕರೆಗೋರಿ ಆಶ್ರಯ ಬಡಾವಣೆಯಲ್ಲಿ ರಸ್ತೆ, ಚರಂಡಿ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವಲ್ಲಿ ಪುರಸಭೆ ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪಿಸಿ ನಿವಾಸಿಗಳು ಶನಿವಾರ ಪುರಸಭೆ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಮಾತನಾಡಿದ ಮಂಜುನಾಥ ಅಂಗಡಿ ಹಾಗೂ ಆನಂದ ಅಮರಶೆಟ್ಟಿ, ಹಲವು ಬಾರಿ ಪುರಸಭೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಡಾವಣೆಯಲ್ಲಿ ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದ ಕಾರಣ ಕೊಳಚೆ ನೀರು ರಸ್ತೆಯಲ್ಲೇ ನಿಂತು ದುರ್ವಾಸನೆ ಹರಡುತ್ತಿದೆ. ಇದರಿಂದ ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗಿದ್ದು, ರಸ್ತೆ ಸಂಪೂರ್ಣ ಹದಗೆಟ್ಟಿರುವುದರಿಂದ ಮಳೆಗಾಲದಲ್ಲಿ ಸಂಚಾರ ದುಸ್ತರವಾಗಿದೆ. ಕೂಡಲೇ ಶಾಶ್ವತ ಪರಿಹಾರ ಕಲ್ಪಿಸಿ ಅಗತ್ಯ ಮೂಲಸೌಲಭ್ಯಗಳನ್ನು ಒದಗಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆ ವೇಳೆ ಪುರಸಭೆಯ ಹಿರಿಯ ಆರೋಗ್ಯ ನಿರೀಕ್ಷಕ ಮಂಜುನಾಥ ಮುದಗಲ್ಲ ಪ್ರತಿಕ್ರಿಯಿಸಿ, ಕರೆಗೋರಿ ಆಶ್ರಯ ಬಡಾವಣೆಯ ಸಮಗ್ರ ಅಭಿವೃದ್ಧಿಗೆ ₹48 ಲಕ್ಷ ವೆಚ್ಚದ ಕ್ರಿಯಾ ಯೋಜನೆ ಸಿದ್ಧಪಡಿಸಿ ಸರ್ಕಾರದ ಅನುಮೋದನೆಗೆ ಕಳುಹಿಸಲಾಗಿದೆ. ಅನುದಾನ ಬಿಡುಗಡೆಯಾದ ತಕ್ಷಣ ರಸ್ತೆ, ಚರಂಡಿ ಸೇರಿದಂತೆ ಅಗತ್ಯ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಭರವಸೆ ನೀಡಿದರು.

ನಿವಾಸಿಗಳ ಮನವಿ ಮೇರೆಗೆ ಹಿರಿಯ ಆರೋಗ್ಯ ನಿರೀಕ್ಷಕ ಮಂಜುನಾಥ ಮುದಗಲ್ಲ ಹಾಗೂ ಲಿಂಬಯ್ಯ ಸ್ವಾಮಿಮಠ ಸ್ಥಳಕ್ಕೆ ಭೇಟಿ ನೀಡಿ ಬಡಾವಣೆಯ ಪರಿಸ್ಥಿತಿಯನ್ನು ಪರಿಶೀಲಿಸಿದರು. ರಸ್ತೆಯಲ್ಲಿ ನಿಂತಿದ್ದ ಮಳೆ ಹಾಗೂ ಚರಂಡಿ ನೀರು ಸರಾಗವಾಗಿ ಹರಿದು ಹೋಗುವಂತೆ ಜೆಸಿಬಿ ಯಂತ್ರದ ಮೂಲಕ ತಾತ್ಕಾಲಿಕ ವ್ಯವಸ್ಥೆ ಮಾಡುವುದಾಗಿ ತಿಳಿಸಿದರು.

ಪ್ರತಿಭಟನೆಯಲ್ಲಿ ಆನಂದ ಅಮರಶೆಟ್ಟಿ, ಮಂಜುನಾಥ ಅಂಗಡಿ, ಶಶಿಕಲಾ ಶೇಖಣ್ಣವರ, ಲಕ್ಷ್ಮಣ ನಾವಿ, ಮಲ್ಲಿಕಾರ್ಜುನ ಕರೆಯುತ್ತಿನ, ಮಂಜು ಸೋಗಿ, ಮಹೇಶ ಶಿರಹಟ್ಟಿ, ಗಂಗಾಧರ ಕರೆಯುತ್ತಿನ, ಬಸವರಾಜ ಅಕ್ಕಿ, ಬಸವರಾಜ ಹುಬ್ಬಳ್ಳಿ, ಗಣೇಶ ಉಮಚಗಿ, ಮಂಜುನಾಥ ಹುದ್ದಾರ, ಅಶೋಕ ಗೊರವರ, ಯಲ್ಲಪ್ಪ ಹಿಮ್ಮಡಿ, ಮಂಜುನಾಥ ದೊಡ್ಡಮನಿ, ಗುರುನಾಥ ಬೇಂದ್ರೆ, ಬಸವರಾಜ ಕನವಳ್ಳಿ, ರವಿ ಹುಬ್ಬಳ್ಳಿ, ವರುಣ ಸೊರಟೂರ, ಆನಂದ ಬೂದಿಹಾಳ ಸೇರಿದಂತೆ ಆಶ್ರಯ ಬಡಾವಣೆಯ ನಿವಾಸಿಗಳು ಪಾಲ್ಗೊಂಡಿದ್ದರು.

“ಮೂಲಸೌಲಭ್ಯಕ್ಕಾಗಿ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಪ್ರಯೋಜನವಾಗಿಲ್ಲ. ರಸ್ತೆ, ಚರಂಡಿ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು.”

– ಪ್ರತಿಭಟನಾನಿರತ ಆಶ್ರಯ ಬಡಾವಣೆಯ ನಿವಾಸಿಗಳು

ವಚನದ ಬೆಳಕಿನಲ್ಲಿ ಬೆಳೆಯಲಿ ಮಕ್ಕಳ ಭವಿಷ್ಯ: ಶಿವಕುಮಾರಗೌಡ ಪಾಟೀಲ

0

ವಿಜಯಸಾಕ್ಷಿ ಸುದ್ದಿ, ಗದಗ: ಶರಣ ಸಾಹಿತ್ಯ ಮತ್ತು ವಚನ ಸಾಹಿತ್ಯವು ಮನುಷ್ಯನಿಗೆ ಅರಿವು, ವಿದ್ಯೆ ಹಾಗೂ ಸಂಸ್ಕಾರ ನೀಡಿ ಸನ್ಮಾರ್ಗದಲ್ಲಿ ಬದುಕುವ ಶಕ್ತಿಯನ್ನು ನೀಡುತ್ತದೆ ಎಂದು ಧಾರವಾಡ ಕೆಸಿಸಿ ಬ್ಯಾಂಕ್ ಅಧ್ಯಕ್ಷ ಶಿವಕುಮಾರಗೌಡ ಪಾಟೀಲ ಹೇಳಿದರು.

ಗದಗ ತಾಲೂಕಿನ ಹೊಸಳ್ಳಿ ಗ್ರಾಮದ ಬೂದೀಶ್ವರ ಸಂಸ್ಥಾನ ಮಠದಲ್ಲಿ ಶನಿವಾರ ನಡೆದ ಗದಗ ಜಿಲ್ಲಾ ದ್ವಿತೀಯ ಮಕ್ಕಳ ಶರಣ ಸಾಹಿತ್ಯ ಸಮ್ಮೇಳನದಲ್ಲಿ ಗ್ರಂಥಗಳನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

“ಕೋಶ ಓದಬೇಕು, ದೇಶ ಸುತ್ತಬೇಕು” ಎಂಬ ಗಾದೆಯಂತೆ ಜಗತ್ತು ಮತ್ತು ಬದುಕಿನ ಅರಿವಿಗೆ ಸಾಹಿತ್ಯದ ಅಧ್ಯಯನ ಅಗತ್ಯ. ಶರಣ ಸಾಹಿತ್ಯವು ಕಣ್ಣಿಲ್ಲದವರಿಗೆ ಕಣ್ಣು, ವಿದ್ಯೆಯಿಲ್ಲದವರಿಗೆ ಅರಿವು ಹಾಗೂ ಬದುಕಿಗೆ ಸ್ಪಷ್ಟ ದಾರಿ ತೋರಿಸುವ ದಿವ್ಯಶಕ್ತಿಯಾಗಿದೆ. ಜಾತಿ-ಮತಗಳ ಭೇದ ಮರೆತು “ಮನುಷ್ಯ ಜಾತಿ ಒಂದೇ” ಎಂಬ ಮೌಲ್ಯವನ್ನು ಮಕ್ಕಳಲ್ಲಿ ಬಿತ್ತಲು ಶರಣ ಸಾಹಿತ್ಯದ ಬೋಧನೆ ಅತ್ಯಗತ್ಯ ಎಂದರು.

ಸಮ್ಮೇಳನದ ಸರ್ವಾಧ್ಯಕ್ಷ ಡಾ. ನಿಂಗು ಸೊಲಗಿ ಮಾತನಾಡಿ, ಬಸವಣ್ಣನವರ ವಚನಗಳು ಹಾಗೂ ಶರಣರ ತತ್ವಗಳು ಸಮಾಜಕ್ಕೆ ಸದಾ ದಾರಿದೀಪವಾಗಿವೆ. ವಚನಗಳ ಆದರ್ಶ ಹಾಗೂ ಶರಣ ಸಂಸ್ಕೃತಿಯನ್ನು ಬಾಲ್ಯದಲ್ಲಿಯೇ ಮಕ್ಕಳಿಗೆ ಪರಿಚಯಿಸಬೇಕು. ಶರಣ ಸಂಸ್ಕೃತಿ ಯಾವುದೇ ಒಂದು ವರ್ಗಕ್ಕೆ ಸೀಮಿತವಲ್ಲ; ಅದು ಸಮಸ್ತ ಮಾನವಕುಲದ ಸಾರ್ವಭೌಮ ಸಂಸ್ಕೃತಿಯಾಗಿದೆ ಎಂದು ಹೇಳಿದರು.

“ಇವ ನಮ್ಮವ” ಎಂಬ ಸಮಾನತೆಯ ಭಾವನೆಯನ್ನು ಮಕ್ಕಳಲ್ಲಿ ಬಿತ್ತಿದಾಗ ಮಾತ್ರ ಆದರ್ಶ ಸಮಾಜ ನಿರ್ಮಾಣ ಸಾಧ್ಯ. ಮೇವುಂಡಿ ಮಲ್ಲಾರಿ ಅವರ ಕಥೆಗಳನ್ನು ಉದಾಹರಿಸಿ, ಮಕ್ಕಳಲ್ಲಿ ನೈಸರ್ಗಿಕ ಕುತೂಹಲ, ಸೃಜನಶೀಲತೆ ಹಾಗೂ ವೈಜ್ಞಾನಿಕ ಮನೋಭಾವ ಬೆಳೆಸಬೇಕಿದೆ ಎಂದರು.

ಇಂದಿನ ಮಕ್ಕಳು ಪ್ರಕೃತಿಯಿಂದ ದೂರವಾಗುತ್ತಿದ್ದಾರೆ. ಅವರಿಗೆ ಜಾನಪದ ಆಟಗಳು, ಕಥೆಗಳು, ಕಾಯಕ ಹಾಗೂ ದಾಸೋಹ ಸಂಸ್ಕೃತಿಯನ್ನು ಶಿಕ್ಷಣದ ಭಾಗವಾಗಿ ಪರಿಚಯಿಸಬೇಕು. ಕೇವಲ ಪರೀಕ್ಷೆಗಾಗಿ ಓದುವ ಶಿಕ್ಷಣವಲ್ಲ, ಜೀವನದ ಸವಾಲುಗಳನ್ನು ಎದುರಿಸುವ ಜೀವನ ಕೌಶಲಗಳನ್ನು ಕಲಿಸುವುದು ಪೋಷಕರು ಮತ್ತು ಶಿಕ್ಷಕರ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.

ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಅಪ್ಪಣ್ಣ ಇನಾಮತಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಕ್ಕಳ ಮನಸ್ಸು ಬಿಳಿ ಹಾಳೆಯಂತೆ. ಅವರಲ್ಲಿ ನಾವು ಬಿತ್ತುವ ಮೌಲ್ಯಗಳೇ ಅವರ ಭವಿಷ್ಯ ರೂಪಿಸುತ್ತವೆ. ಪೋಷಕರು ತಮ್ಮ ನಿರೀಕ್ಷೆಗಳ ಒತ್ತಡ ಹೇರದೆ, ಮಕ್ಕಳ ಆಸಕ್ತಿ ಮತ್ತು ಪ್ರತಿಭೆಗೆ ಪ್ರೋತ್ಸಾಹ ನೀಡಬೇಕು ಎಂದರು.

ಸಾನಿಧ್ಯ ವಹಿಸಿದ್ದ ಅಭಿನವ ಬೂದೀಶ್ವರ ಮಹಾಸ್ವಾಮೀಜಿ ಮಾತನಾಡಿ, ಇಂದಿನ ಬದಲಾಗುತ್ತಿರುವ ಕಾಲಘಟ್ಟದಲ್ಲಿ ಮಕ್ಕಳಿಗೆ ಉತ್ತಮ ಸಂಸ್ಕಾರ, ಸಂಸ್ಕೃತಿ ಹಾಗೂ ಸಮಯದ ಮೌಲ್ಯವನ್ನು ತಿಳಿಸುವ ಅಗತ್ಯವಿದೆ. ಬಾಲ್ಯ ಮತ್ತು ವಿದ್ಯಾಭ್ಯಾಸದ ಅವಧಿಯನ್ನು ಸದುಪಯೋಗಪಡಿಸಿಕೊಂಡರೆ ಜೀವನ ಸಾರ್ಥಕವಾಗುತ್ತದೆ ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ಡಾ. ಶಿವಪ್ಪ ಕುರಿ, ಸುಧಾ ಹುಚ್ಚಣ್ಣವರ, ಶಿವಪ್ರಕಾಶ ಮಹಾಜನಶೆಟ್ಟರ, ಸುಲೋಚನಾ ಐಹೊಳೆ, ಡಿ.ಎಸ್. ತಳವಾರ, ಎಂ.ಕೆ. ಲಮಾಣಿ, ನಂದಾ ಕಪ್ಪತ್ತನವರ, ಬೂದಪ್ಪ ಅಂಗಡಿ, ಬಸವರಾಜ ಕೊಟಗಿ, ಪ್ರಕಾಶ ಅಸುಂಡಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಕೆ.ಎ. ಬಳಿಗೇರ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿವಾನಂದ ಧೂಳಪ್ಪನವರ ಹಾಗೂ ಎಸ್.ಎಂ. ಮರಿಗೌಡ್ರ ಕಾರ್ಯಕ್ರಮ ನಿರೂಪಿಸಿದರು. ಡಿ.ಎಸ್. ಬಾಪುರಿ ವಂದಿಸಿದರು.

ಕಾರ್ಯಕ್ರಮದಲ್ಲಿ ಝೀ ವಾಹಿನಿಯ ಸ್ಪರ್ಧಿ, ಗದಗ ಜಿಲ್ಲೆಯ ಪ್ರೀತಮ್ ಕಬ್ಬೇರಹಳ್ಳಿ ಅವರಿಗೆ ‘ಬಾಲ ಶರಣಸಿರಿ’ ಪ್ರಶಸ್ತಿ ಪ್ರದಾನ ಮಾಡಲಾಯಿತು. ಚೇತನ ಸೊಲಗಿ ತಮ್ಮ ಗಾಯನದ ಮೂಲಕ ವಿದ್ಯಾರ್ಥಿಗಳ ಗಮನ ಸೆಳೆದರು.

ಶಾಸಕ ಡಾ. ಚಂದ್ರು ಲಮಾಣಿ ಜನ್ಮದಿನ: ರೋಗಿಗಳಿಗೆ ಹಾಲು-ಹಣ್ಣು ವಿತರಣೆ

0

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಶಿರಹಟ್ಟಿ ನಗರದ ಭಾರತೀಯ ಜನತಾ ಪಕ್ಷದ ವತಿಯಿಂದ ಶಾಸಕ ಡಾ. ಚಂದ್ರು ಲಮಾಣಿ ಅವರ ಜನ್ಮದಿನದ ಅಂಗವಾಗಿ ತಾಲೂಕು ಆಸ್ಪತ್ರೆಯಲ್ಲಿ ಶನಿವಾರ ರೋಗಿಗಳಿಗೆ ಹಾಲು, ಹಣ್ಣು ಹಾಗೂ ಬ್ರೆಡ್ ವಿತರಿಸಿ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ನಗರ ಘಟಕದ ಅಧ್ಯಕ್ಷ ನಾಗರಾಜ ಲಕ್ಕುಂಡಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಫಕ್ಕೀರೇಶ ರಟ್ಟಿಹಳ್ಳಿ, ಸಂದೀಪ ಕಪ್ಪತ್ತನವರ, ಜಾನು ಲಮಾಣಿ, ಬಸವರಾಜ ವಡವಿ, ನಂದಾ ಪಲ್ಲೇದ, ಗೂಳಪ್ಪ ಕರಿಗಾರ, ಅಕ್ಬರಸಾಬ ಯಾದಗಿರಿ, ರಾಮಣ್ಣ ಕಂಬಳಿ, ವಿಠ್ಠಲ ಭಿಡವೆ, ಶ್ರೀನಿವಾಸ ಬಾರಬಾರ, ಪರಶುರಾಮ ಡೊಂಕಬಳ್ಳಿ, ಮಲ್ಲಿಕಾರ್ಜುನ ಕಬಾಡಿ, ವಿನೋದ ಕಪ್ಪತ್ತನವರ, ವೀರನಗೌಡ ಪಾಟೀಲ, ಸಂಜು ಸೋಗಿನ, ಶಶಿ ಪೂಜಾರ, ಜಗದೀಶ ತೇಲಿ, ಸಂತೋಷ ತೋಡೆಕಾರ, ಲಕ್ಷ್ಮಣ ಲಮಾಣಿ, ಬಸವರಾಜ ಕಲ್ಯಾಣಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಮೈಸೂರಿಗೆ ಪ್ರಧಾನಿ ಮೋದಿ ಆಗಮನ: ಇಂದು ವಿವೇಕ ಸ್ಮಾರಕ ಉದ್ಘಾಟನೆ, ರಾಮಕೃಷ್ಣ ಆಶ್ರಮಕ್ಕೂ ಭೇಟಿ

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಇಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ್ದಾರೆ. ವಿಶೇಷ ಸೇನಾ ಹೆಲಿಕಾಪ್ಟರ್ ಮೂಲಕ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ಮೋದಿ ಅವರನ್ನು ಅಧಿಕಾರಿಗಳು ಬರಮಾಡಿಕೊಂಡರು.

ಮಂಡಕಳ್ಳಿ ವಿಮಾನ ನಿಲ್ದಾಣದಿಂದ ನಗರದ ಓವಲ್ ಮೈದಾನಕ್ಕೆ ತೆರಳಲಿರುವ ಪ್ರಧಾನಿ ಮೋದಿ ಅವರಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಧಿಕೃತ ಸ್ವಾಗತ ಕೋರಲಿದ್ದಾರೆ.

ಇಂದು ಪ್ರಧಾನಿ ಮೋದಿ, ಸ್ವಾಮಿ ವಿವೇಕಾನಂದರ ಐತಿಹಾಸಿಕ ಮೈಸೂರು ಭೇಟಿಯ ನೆನಪಿಗಾಗಿ ನಿರ್ಮಿಸಲಾಗಿರುವ ‘ವಿವೇಕ ಸ್ಮಾರಕ’ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸುಮಾರು ₹45 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಸ್ವಾಮಿ ವಿವೇಕಾನಂದ ಸ್ಮಾರಕ ಹಾಗೂ ಸಾಂಸ್ಕೃತಿಕ ಯುವ ಕೇಂದ್ರವನ್ನು ಅವರು ಉದ್ಘಾಟಿಸಲಿದ್ದಾರೆ.

ಮೈಸೂರಿನ ನಾರಾಯಣ ಶಾಸ್ತ್ರಿ ರಸ್ತೆಯಲ್ಲಿ ಸ್ವಾಮಿ ವಿವೇಕಾನಂದರು ತಂಗಿದ್ದ ನೆನಪಿಗಾಗಿ ಈ ಸ್ಮಾರಕವನ್ನು ನಿರ್ಮಿಸಲಾಗಿದ್ದು, ಯುವಜನರಲ್ಲಿ ಸಾಂಸ್ಕೃತಿಕ ಹಾಗೂ ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುವ ಉದ್ದೇಶದಿಂದ ಸಾಂಸ್ಕೃತಿಕ ಯುವ ಕೇಂದ್ರಕ್ಕೂ ರೂಪ ನೀಡಲಾಗಿದೆ.

ಸ್ಮಾರಕ ಉದ್ಘಾಟನೆಯ ಬಳಿಕ ಪ್ರಧಾನಿ ಮೋದಿ ನಗರದಲ್ಲಿರುವ ಶ್ರೀ ರಾಮಕೃಷ್ಣ ಆಶ್ರಮಕ್ಕೆ ಭೇಟಿ ನೀಡಿ, ಸ್ವಾಮಿ ವಿವೇಕಾನಂದರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಲಿದ್ದಾರೆ. ಬಳಿಕ ಆಶ್ರಮದ ಆಡಿಟೋರಿಯಂನಲ್ಲಿ ನಡೆಯುವ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಈ ಕಾರ್ಯಕ್ರಮದಲ್ಲಿ ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ಸೇರಿದಂತೆ ಸುಮಾರು 6,000 ಮಂದಿ ಭಾಗವಹಿಸುವ ನಿರೀಕ್ಷೆಯಿದ್ದು, ಕಾರ್ಯಕ್ರಮಕ್ಕಾಗಿ ವಿಶೇಷ ಪಾಸ್ ವ್ಯವಸ್ಥೆ ಮಾಡಲಾಗಿದೆ.

ಆಂಧ್ರ ಪ್ರದೇಶಕ್ಕೆ ಪ್ರಧಾನಿ ಮೋದಿ ಬಂಪರ್ ಗಿಫ್ಟ್: ₹17,900 ಕೋಟಿ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

0

ಅಮರಾವತಿ: ಆಂಧ್ರ ಪ್ರದೇಶದ ಅಭಿವೃದ್ಧಿಗೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ಮಹತ್ವದ ಕೊಡುಗೆ ನೀಡಿದ್ದಾರೆ. ರಾಜ್ಯದಲ್ಲಿ ಒಟ್ಟು ₹17,900 ಕೋಟಿಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ ಪ್ರಧಾನಿ, ವಿಜಯನಗರಂ ಜಿಲ್ಲೆಯ ಭೋಗಾಪುರಂನಲ್ಲಿ ನಿರ್ಮಿಸಲಾಗಿರುವ ಅಳ್ಳೂರಿ ಸೀತಾರಾಮ ರಾಜು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಉದ್ಘಾಟಿಸಿದರು.

ಭೋಗಾಪುರಂನಲ್ಲಿ ನಡೆದ ಬೃಹತ್ ಸಾರ್ವಜನಿಕ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಈ ಯೋಜನೆಗಳು ‘ಸ್ವರ್ಣ ಆಂಧ್ರ’ ನಿರ್ಮಾಣದ ಗುರಿಗೆ ಮತ್ತಷ್ಟು ವೇಗ ನೀಡಲಿವೆ ಎಂದು ಹೇಳಿದರು. ಅಭಿವೃದ್ಧಿ ಕ್ಷೇತ್ರದಲ್ಲಿ ಆಂಧ್ರ ಪ್ರದೇಶ ಹೊಸ ದಾಖಲೆಗಳನ್ನು ನಿರ್ಮಿಸುತ್ತಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಪ್ರಧಾನಿ ಮೋದಿ ಅವರ ಪ್ರವಾಸದ ಪ್ರಮುಖ ಕಾರ್ಯಕ್ರಮವಾಗಿದ್ದ ಭೋಗಾಪುರಂ ವಿಮಾನ ನಿಲ್ದಾಣವನ್ನು ಸುಮಾರು ₹5,000 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಇದು ಆಂಧ್ರ ಪ್ರದೇಶದ ಮೂರನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾಗಿದೆ.

ಸ್ವಾತಂತ್ರ್ಯ ಹೋರಾಟಗಾರ ಹಾಗೂ ಆದಿವಾಸಿ ನಾಯಕ ಅಳ್ಳೂರಿ ಸೀತಾರಾಮ ರಾಜು ಅವರ ಹೆಸರನ್ನು ವಿಮಾನ ನಿಲ್ದಾಣಕ್ಕೆ ಇಡಲಾಗಿದೆ. ಮೊದಲ ಹಂತದಲ್ಲಿ ಈ ವಿಮಾನ ನಿಲ್ದಾಣವು ವರ್ಷಕ್ಕೆ 60 ಲಕ್ಷ ಪ್ರಯಾಣಿಕರನ್ನು ನಿರ್ವಹಿಸುವ ಸಾಮರ್ಥ್ಯ ಹೊಂದಿದ್ದು, ಮುಂದಿನ ದಿನಗಳಲ್ಲಿ ಇದನ್ನು 4 ಕೋಟಿ ಪ್ರಯಾಣಿಕರ ಸಾಮರ್ಥ್ಯಕ್ಕೆ ವಿಸ್ತರಿಸುವ ಯೋಜನೆ ರೂಪಿಸಲಾಗಿದೆ.

ವಿಮಾನ ನಿಲ್ದಾಣ ಉದ್ಘಾಟನೆ ಬಳಿಕ ಮಾತನಾಡಿದ ಪ್ರಧಾನಿ ಮೋದಿ, ಅಳ್ಳೂರಿ ಸೀತಾರಾಮ ರಾಜು ಅವರು ಆದಿವಾಸಿಗಳ ಹಕ್ಕುಗಳಿಗಾಗಿ ಹೋರಾಡಿದ ಇದೇ ನೆಲದಲ್ಲಿ ಈ ವಿಮಾನ ನಿಲ್ದಾಣ ನಿರ್ಮಾಣವಾಗಿದೆ ಎಂದು ಹೇಳಿದರು.

“ಭೋಗಾಪುರಂ ವಿಮಾನ ನಿಲ್ದಾಣವು ಉತ್ತರ ಆಂಧ್ರದ ಅಭಿವೃದ್ಧಿಗೆ ಹೊಸ ರನ್‌ವೇ ಆಗಲಿದೆ. ಇದು ರಾಜ್ಯದ ಯುವಜನತೆಗೆ ಉತ್ತಮ ಭವಿಷ್ಯದ ಲಾಂಚ್‌ಪ್ಯಾಡ್ ಆಗಲಿದೆ” ಎಂದು ಪ್ರಧಾನಿ ಹೇಳಿದರು.

ಇದೇ ವೇಳೆ ಕಾಂಗ್ರೆಸ್ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ ಪ್ರಧಾನಿ ಮೋದಿ, ಹಿಂದೆ ವಿಮಾನ ನಿಲ್ದಾಣಗಳಿಗೆ ಒಂದೇ ಕುಟುಂಬದ ಹೆಸರನ್ನು ಇಡುವ ಸಂಪ್ರದಾಯವಿತ್ತು ಎಂದು ಟೀಕಿಸಿದರು.

“ನಮ್ಮ ಸರ್ಕಾರ ಆ ಸಂಪ್ರದಾಯವನ್ನು ಬದಲಿಸಿದೆ. ಅಯೋಧ್ಯೆಯ ವಿಮಾನ ನಿಲ್ದಾಣಕ್ಕೆ ವಾಲ್ಮೀಕಿ ಅವರ ಹೆಸರು, ಪಂಜಾಬ್‌ನ ವಿಮಾನ ನಿಲ್ದಾಣಕ್ಕೆ ಸಂತ್ ರವಿದಾಸ್ ಅವರ ಹೆಸರು ಹಾಗೂ ಇದೀಗ ಭೋಗಾಪುರಂ ವಿಮಾನ ನಿಲ್ದಾಣಕ್ಕೆ ಅಳ್ಳೂರಿ ಸೀತಾರಾಮ ರಾಜು ಅವರ ಹೆಸರನ್ನು ಇಡಲಾಗಿದೆ” ಎಂದು ಹೇಳಿದರು.