Home Blog

ಕೊಹ್ಲಿ, ಧೋನಿ, ಬುಮ್ರಾ, ಕಪಿಲ್ ದೇವ್ʼರನ್ನು ಹಿಂದಿಕ್ಕಿದ ಸಚಿನ್: ಸಾರ್ವಕಾಲಿಕ ಶ್ರೇಷ್ಠ ಆಟಗಾರನನ್ನು ಆಯ್ಕೆ ಮಾಡಿದ ಅಶ್ವಿನ್

0

ಚೆನ್ನೈ: ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಸಾರ್ವಕಾಲಿಕ ಶ್ರೇಷ್ಠ ಆಟಗಾರ ಯಾರು ಎಂಬ ಪ್ರಶ್ನೆಗೆ ಟೀಂ ಇಂಡಿಯಾದ ಅನುಭವಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ತಮ್ಮದೇ ಆದ ಉತ್ತರ ನೀಡಿದ್ದಾರೆ. ದಿಗ್ಗಜ ಆಟಗಾರರ ನಡುವೆ ನಡೆದ ಕುತೂಹಲಕಾರಿ ಹೋಲಿಕೆಯಲ್ಲಿ ಕೊನೆಗೂ ಬ್ಯಾಟಿಂಗ್ ದಂತಕಥೆ ಸಚಿನ್ ತೆಂಡೂಲ್ಕರ್ ಅವರನ್ನು ಅಶ್ವಿನ್ ಸಾರ್ವಕಾಲಿಕ ಶ್ರೇಷ್ಠ ಆಟಗಾರ ಎಂದು ಆಯ್ಕೆ ಮಾಡಿದ್ದಾರೆ.

ಇಎಸ್‌ಪಿಎನ್ ಕ್ರಿಕ್‌ಇನ್ಫೋ ಟಾಕ್ ಶೋನಲ್ಲಿ ಮಾತನಾಡಿದ ಅಶ್ವಿನ್, ಭಾರತದ ಹಲವು ತಲೆಮಾರುಗಳ ಸ್ಟಾರ್ ಕ್ರಿಕೆಟಿಗರನ್ನು ಪರಸ್ಪರ ಹೋಲಿಕೆ ಮಾಡಿ ತಮ್ಮ ಆಯ್ಕೆಯನ್ನು ಅಂತಿಮಗೊಳಿಸಿದರು. ಈ ವೇಳೆ ವಿರಾಟ್ ಕೊಹ್ಲಿ, ಎಂ.ಎಸ್. ಧೋನಿ, ಸುನಿಲ್ ಗವಾಸ್ಕರ್, ಜಸ್ಪ್ರೀತ್ ಬುಮ್ರಾ, ವಿರೇಂದ್ರ ಸೆಹ್ವಾಗ್, ರವೀಂದ್ರ ಜಡೇಜಾ ಸೇರಿದಂತೆ ಹಲವು ದಿಗ್ಗಜರ ಹೆಸರುಗಳು ಚರ್ಚೆಗೆ ಬಂದವು.

ಕೊಹ್ಲಿ ವಿರುದ್ಧ ಬುಮ್ರಾ:

ವಿರಾಟ್ ಕೊಹ್ಲಿ ಹಾಗೂ ಜಸ್ಪ್ರೀತ್ ಬುಮ್ರಾ ನಡುವೆ ಒಬ್ಬರನ್ನು ಆಯ್ಕೆ ಮಾಡುವ ಸಂದರ್ಭದಲ್ಲಿ ಅಶ್ವಿನ್, ಕೊಹ್ಲಿ ಬದಲಿಗೆ ಬುಮ್ರಾ ಅವರನ್ನು ಆಯ್ಕೆ ಮಾಡಿದರು. ತಮ್ಮ ಆಯ್ಕೆಯ ಬಗ್ಗೆ ತಮಾಷೆಯಾಗಿ ಪ್ರತಿಕ್ರಿಯಿಸಿದ ಅಶ್ವಿನ್, ತಾವೊಬ್ಬ ಬೌಲರ್ ಆಗಿರುವ ಕಾರಣ ಬುಮ್ರಾ ಅವರನ್ನು ಆಯ್ಕೆ ಮಾಡಿರಬಹುದು ಎಂದು ಹೇಳಿದರು.

ಧೋನಿಗೆ ಮಣೆ ಹಾಕಿದ ಅಶ್ವಿನ್:

ರವೀಂದ್ರ ಜಡೇಜಾ ಮತ್ತು ಮಾಜಿ ನಾಯಕ ಎಂ.ಎಸ್. ಧೋನಿ ನಡುವಿನ ಹೋಲಿಕೆಯಲ್ಲಿ ಅಶ್ವಿನ್, ಧೋನಿ ಅವರನ್ನು ಶ್ರೇಷ್ಠರೆಂದು ಆಯ್ಕೆ ಮಾಡಿದರು. ಆದರೆ ಧೋನಿ ಹಾಗೂ ವಿರೇಂದ್ರ ಸೆಹ್ವಾಗ್ ನಡುವೆ ಆಯ್ಕೆ ಮಾಡುವ ಸಂದರ್ಭ ಬಂದಾಗ ಅಚ್ಚರಿಯ ನಿರ್ಧಾರ ಕೈಗೊಂಡ ಅಶ್ವಿನ್, ಧೋನಿ ಬದಲಿಗೆ ಸೆಹ್ವಾಗ್ ಅವರನ್ನು ಆಯ್ಕೆ ಮಾಡಿದರು.

ಇದಕ್ಕೂ ಮುನ್ನ ಸುನಿಲ್ ಗವಾಸ್ಕರ್ ಮತ್ತು ವಿರೇಂದ್ರ ಸೆಹ್ವಾಗ್ ನಡುವೆ ನಡೆದ ಹೋಲಿಕೆಯಲ್ಲೂ ಅಶ್ವಿನ್, ಗವಾಸ್ಕರ್ ಅವರನ್ನು ಬದಿಗಿಟ್ಟು ಸೆಹ್ವಾಗ್ ಅವರಿಗೆ ಮಣೆ ಹಾಕಿದ್ದರು.

ಗಂಗೂಲಿ ವಿರುದ್ಧ ಅಶ್ವಿನ್:

ಸೌರವ್ ಗಂಗೂಲಿ ಮತ್ತು ತಮ್ಮ ನಡುವಿನ ಹೋಲಿಕೆಯಲ್ಲಿ ಅಶ್ವಿನ್, ಯಾವುದೇ ಹಿಂಜರಿಕೆಯಿಲ್ಲದೆ ಮಾಜಿ ನಾಯಕ ಸೌರವ್ ಗಂಗೂಲಿ ಅವರನ್ನು ಆಯ್ಕೆ ಮಾಡಿದರು.

ಕೊನೆಗೂ ಸಚಿನ್‌ಗೆ ಅಗ್ರಸ್ಥಾನ:

ಅಂತಿಮ ನಾಲ್ವರ ಪಟ್ಟಿಯಿಂದ ಇಬ್ಬರನ್ನು ಆಯ್ಕೆ ಮಾಡುವ ಹಂತದಲ್ಲಿ ಅಶ್ವಿನ್, ವಿರೇಂದ್ರ ಸೆಹ್ವಾಗ್ ಅವರನ್ನು ಕೈಬಿಟ್ಟು ಸಚಿನ್ ತೆಂಡೂಲ್ಕರ್ ಅವರನ್ನು ಉಳಿಸಿಕೊಂಡರು. ಮತ್ತೊಂದೆಡೆ ಜಸ್ಪ್ರೀತ್ ಬುಮ್ರಾ ಬದಲಿಗೆ 1983ರ ವಿಶ್ವಕಪ್ ವಿಜೇತ ನಾಯಕ ಕಪಿಲ್ ದೇವ್ ಅವರನ್ನು ಆಯ್ಕೆ ಮಾಡಿದರು.

ಕೊನೆಯ ಹಂತದಲ್ಲಿ ಕಪಿಲ್ ದೇವ್ ಮತ್ತು ಸಚಿನ್ ತೆಂಡೂಲ್ಕರ್ ನಡುವೆ ಆಯ್ಕೆ ಮಾಡುವ ಸಂದರ್ಭದಲ್ಲಿ ಅಶ್ವಿನ್, ತಮ್ಮ ವೈಯಕ್ತಿಕ ಇಷ್ಟವನ್ನು ಪರಿಗಣಿಸಿ ಸಚಿನ್ ತೆಂಡೂಲ್ಕರ್ ಅವರನ್ನೇ ಭಾರತದ ಸಾರ್ವಕಾಲಿಕ ಶ್ರೇಷ್ಠ ಕ್ರಿಕೆಟಿಗ ಎಂದು ಘೋಷಿಸಿದರು.

ಸಚಿನ್ ತೆಂಡೂಲ್ಕರ್ ಅವರ ಬ್ಯಾಟಿಂಗ್ ದಾಖಲೆ, ಭಾರತೀಯ ಕ್ರಿಕೆಟ್‌ಗೆ ನೀಡಿದ ಕೊಡುಗೆ ಹಾಗೂ ಹಲವು ತಲೆಮಾರುಗಳ ಅಭಿಮಾನಿಗಳ ಮೇಲೆ ಬೀರಿದ ಪ್ರಭಾವವನ್ನು ಪರಿಗಣಿಸಿದರೆ ಅಶ್ವಿನ್ ಅವರ ಆಯ್ಕೆ ವಿಶೇಷ ಗಮನ ಸೆಳೆದಿದೆ. ಇದೇ ವೇಳೆ ಇತ್ತೀಚೆಗೆ ದಕ್ಷಿಣ ಆಫ್ರಿಕಾದ ಮಾಜಿ ದಿಗ್ಗಜ ಎಬಿ ಡಿವಿಲಿಯರ್ಸ್ ಅವರು ಸಚಿನ್ ತೆಂಡೂಲ್ಕರ್‌ಗಿಂತ ವಿರಾಟ್ ಕೊಹ್ಲಿಯೇ ಶ್ರೇಷ್ಠ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದರಿಂದ, ಈ ವಿಚಾರ ಮತ್ತೊಮ್ಮೆ ಕ್ರಿಕೆಟ್ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ; ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಭಸ್ಮ!

0

ರಾಮನಗರ: ಕನಕಪುರ ತಾಲೂಕಿನ ಬಂಡೆಬಸಪ್ಪನದೊಡ್ಡಿ ಗ್ರಾಮದಲ್ಲಿ ತಡರಾತ್ರಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ ಹೊತ್ತಿಕೊಂಡು ಲಕ್ಷಾಂತರ ರೂಪಾಯಿ ಮೌಲ್ಯದ ಗೃಹೋಪಯೋಗಿ ವಸ್ತುಗಳು ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ.

ಗ್ರಾಮದ ನಿವಾಸಿ ಪರಮಶಿವಯ್ಯ ಅವರಿಗೆ ಸೇರಿದ ಮನೆಯಲ್ಲಿ ಈ ಅಗ್ನಿ ಅವಘಡ ಸಂಭವಿಸಿದೆ. ತಡರಾತ್ರಿ ದಿಢೀರನೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ಮನೆಯಾದ್ಯಂತ ಬೆಂಕಿ ವ್ಯಾಪಿಸಿದೆ.

ಬೆಂಕಿಯ ತೀವ್ರತೆಗೆ ಮನೆಯಲ್ಲಿದ್ದ ಗೃಹೋಪಯೋಗಿ ವಸ್ತುಗಳು, ದಿನಬಳಕೆಯ ಸಾಮಗ್ರಿಗಳು ಸೇರಿದಂತೆ ಹಲವು ವಸ್ತುಗಳು ಸಂಪೂರ್ಣವಾಗಿ ಸುಟ್ಟುಹೋಗಿವೆ. ಘಟನೆಯಿಂದ ಕುಟುಂಬಕ್ಕೆ ಲಕ್ಷಾಂತರ ರೂಪಾಯಿ ನಷ್ಟವಾಗಿದೆ ಎಂದು ತಿಳಿದುಬಂದಿದೆ.

ಅದೃಷ್ಟವಶಾತ್ ಮನೆಯಲ್ಲಿದ್ದ ಎಲ್ಲರೂ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಸಾತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಬೀದಿ ನಾಯಿಗಳ ಅಟ್ಟಹಾಸಕ್ಕೆ 5 ಕುರಿಗಳು ಬಲಿ; 3 ಗಂಭೀರ, ರೈತ ಕಂಗಾಲು!

0

ಮಂಡ್ಯ: ಬೀದಿ ನಾಯಿಗಳ ಹಾವಳಿಗೆ ಐದು ಕುರಿಗಳು ಬಲಿಯಾಗಿದ್ದು, ಮೂರು ಕುರಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕುದುರಗುಂಡಿ ಗ್ರಾಮದಲ್ಲಿ ತಡರಾತ್ರಿ ನಡೆದಿದೆ.

ಕುದುರಗುಂಡಿ ಗ್ರಾಮದ ಪಾಪಣ್ಣ ಎಂಬುವವರಿಗೆ ಸೇರಿದ ಕೊಟ್ಟಿಗೆಗೆ ರಾತ್ರಿ ವೇಳೆ ಬೀದಿ ನಾಯಿಗಳು ನುಗ್ಗಿವೆ. ಬಳಿಕ ಕೊಟ್ಟಿಗೆಯಲ್ಲಿದ್ದ ಕುರಿಗಳ ಮೇಲೆ ದಾಳಿ ನಡೆಸಿವೆ. ಏಕಾಏಕಿ ನಡೆದ ದಾಳಿಯಿಂದ ಕುರಿಗಳು ತಪ್ಪಿಸಿಕೊಳ್ಳಲು ಸಾಧ್ಯವಾಗದೆ, ಐದು ಕುರಿಗಳು ಮೃತಪಟ್ಟಿವೆ. ಇನ್ನೂ ಮೂರು ಕುರಿಗಳು ಗಂಭೀರವಾಗಿ ಗಾಯಗೊಂಡಿವೆ.

ಪಾಪಣ್ಣ ಅವರು ಒಟ್ಟು ಎಂಟು ಕುರಿಗಳನ್ನು ಸಾಕಿಕೊಂಡು ಜೀವನ ನಡೆಸುತ್ತಿದ್ದರು. ಕುರಿಗಳ ಸಾಕಾಣಿಕೆಯನ್ನೇ ಅವಲಂಬಿಸಿದ್ದ ರೈತನಿಗೆ ಒಂದೇ ರಾತ್ರಿ ಐದು ಕುರಿಗಳನ್ನು ಕಳೆದುಕೊಂಡಿರುವುದು ದೊಡ್ಡ ಆರ್ಥಿಕ ನಷ್ಟವನ್ನುಂಟು ಮಾಡಿದೆ. ಘಟನೆಯಿಂದ ಪಾಪಣ್ಣ ಹಾಗೂ ಅವರ ಕುಟುಂಬ ಕಂಗಾಲಾಗಿದೆ.

ಬೀದಿ ನಾಯಿಗಳ ಹಾವಳಿ ಗ್ರಾಮದಲ್ಲಿ ಹೆಚ್ಚಾಗಿದ್ದು, ಸಾಕುಪ್ರಾಣಿಗಳು ಹಾಗೂ ಜಾನುವಾರುಗಳಿಗೆ ಆತಂಕ ಎದುರಾಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ರಾತ್ರಿ ವೇಳೆ ಕೊಟ್ಟಿಗೆಗಳಿಗೆ ನುಗ್ಗುವ ನಾಯಿಗಳಿಂದ ಮತ್ತಷ್ಟು ಅನಾಹುತ ಸಂಭವಿಸುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಪರಿಹಾರಕ್ಕೆ ಆಗ್ರಹ:

ಕುರಿಗಳನ್ನು ಕಳೆದುಕೊಂಡಿರುವ ರೈತ ಪಾಪಣ್ಣ ಅವರಿಗೆ ಸಂಬಂಧಪಟ್ಟ ಇಲಾಖೆ ವತಿಯಿಂದ ಸೂಕ್ತ ಪರಿಹಾರ ನೀಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಗಾಯಗೊಂಡಿರುವ ಮೂರು ಕುರಿಗಳಿಗೆ ಅಗತ್ಯ ಚಿಕಿತ್ಸೆ ಕೊಡಿಸುವಂತೆ ಮನವಿ ಮಾಡಿದ್ದಾರೆ.

ಇದೇ ವೇಳೆ ಗ್ರಾಮದಲ್ಲಿ ಬೀದಿ ನಾಯಿಗಳ ಹಾವಳಿಯನ್ನು ನಿಯಂತ್ರಿಸಲು ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳಬೇಕು. ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿರುವ ನಾಯಿಗಳನ್ನು ನಿಯಂತ್ರಿಸಿ, ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಬಾಗಲಕೋಟೆಯಲ್ಲಿ ಭೀಕರ ಅಗ್ನಿ ಅವಘಡ; ಪ್ರವಾಹ ಸಂತ್ರಸ್ತರ 20ಕ್ಕೂ ಹೆಚ್ಚು ಶೆಡ್‌ಗಳು ಸುಟ್ಟು ಕರಕಲು

0

ಬಾಗಲಕೋಟೆ: ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ನಾರಾಯಣಪುರ ಜಲಾಶಯದ ಪ್ರವಾಹ ಸಂತ್ರಸ್ತರ ತಾತ್ಕಾಲಿಕ ಶೆಡ್‌ಗಳು ಸುಟ್ಟು ಕರಕಲಾದ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಇದ್ದಲಗಿ ಗ್ರಾಮದಲ್ಲಿ ನಡೆದಿದೆ.

ನಿನ್ನೆ ರಾತ್ರಿ ಸಂಭವಿಸಿದ ಅಗ್ನಿ ಅವಘಡದಲ್ಲಿ 20ಕ್ಕೂ ಹೆಚ್ಚು ಶೆಡ್‌ಗಳು ಸಂಪೂರ್ಣವಾಗಿ ಸುಟ್ಟುಹೋಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಶ್ರಾವಣ ಮಾಸದ ಹಿನ್ನೆಲೆಯಲ್ಲಿ ಸಂತ್ರಸ್ತರು ಪುರಾಣ ಕೇಳಲು ತೆರಳಿದ್ದ ವೇಳೆ ಶೆಡ್‌ಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸಂತ್ರಸ್ತರು ಶೆಡ್‌ಗಳಲ್ಲೇ ಇದ್ದಿದ್ದರೆ ಭಾರಿ ಅನಾಹುತ ಸಂಭವಿಸುವ ಸಾಧ್ಯತೆ ಇತ್ತು ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.

ಬೆಂಕಿಯ ತೀವ್ರತೆಗೆ ಶೆಡ್‌ಗಳಲ್ಲಿದ್ದ ದವಸ-ಧಾನ್ಯ, ಗೃಹೋಪಯೋಗಿ ವಸ್ತುಗಳು ಸೇರಿದಂತೆ ಹಲವು ಸಾಮಗ್ರಿಗಳು ಸುಟ್ಟುಹೋಗಿವೆ. ಶೆಡ್‌ಗಳ ತಗಡುಗಳು ರಾಶಿ ರಾಶಿಯಾಗಿ ನೆಲಕ್ಕೆ ಬಿದ್ದಿದ್ದು, ಸಂತ್ರಸ್ತರ ಬದುಕು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದೆ.

ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಹುನಗುಂದ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದ್ದಾರೆ.

17 ವರ್ಷಗಳಿಂದ ತಾತ್ಕಾಲಿಕ ಶೆಡ್‌ನಲ್ಲೇ ಜೀವನ:

2007-09ರ ಅವಧಿಯಲ್ಲಿ ನಾರಾಯಣಪುರ ಜಲಾಶಯದ ಹಿನ್ನೀರಿನ ಪ್ರವಾಹದಿಂದ ಇದ್ದಲಗಿ ಗ್ರಾಮದ ಹಲವು ಕುಟುಂಬಗಳು ಮನೆ ಕಳೆದುಕೊಂಡಿದ್ದವು. ಬಳಿಕ ಸಂತ್ರಸ್ತರಿಗಾಗಿ ನಿರ್ಮಿಸಲಾಗಿದ್ದ ತಾತ್ಕಾಲಿಕ ಶೆಡ್‌ಗಳಲ್ಲೇ ಹಲವು ಕುಟುಂಬಗಳು ಇಂದಿಗೂ ವಾಸಿಸುತ್ತಿವೆ.

ಸಂತ್ರಸ್ತರಿಗೆ ಶಾಶ್ವತವಾಗಿ ವಾಸಿಸಲು ಜಾಗ ಗುರುತಿಸಲಾಗಿದ್ದರೂ, ನೀರು, ವಿದ್ಯುತ್‌, ರಸ್ತೆ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಇನ್ನೂ ಕಲ್ಪಿಸಿಲ್ಲ ಎಂಬ ಆರೋಪ ಕೇಳಿಬಂದಿದೆ.

ಶಾಶ್ವತ ಸೂರು ಕಲ್ಪಿಸುವಂತೆ ಆಗ್ರಹಿಸಿ ಸಂತ್ರಸ್ತರು ಕಳೆದ 117 ದಿನಗಳಿಂದ ನಿರಂತರ ಧರಣಿ ನಡೆಸುತ್ತಿದ್ದಾರೆ. ಇದರ ನಡುವೆಯೇ ಬೆಂಕಿ ಅವಘಡ ಸಂಭವಿಸಿದ್ದು, ಒಂದೊಂದು ಶೆಡ್‌ನಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ನಷ್ಟವಾಗಿವೆ.

ತಾತ್ಕಾಲಿಕ ಶೆಡ್‌ಗಳಲ್ಲೇ ಹಲವು ವರ್ಷಗಳಿಂದ ಜೀವನ ನಡೆಸುತ್ತಿರುವ ಸಂತ್ರಸ್ತರಿಗೆ ಇದೀಗ ಅಗ್ನಿ ಅವಘಡ ಮತ್ತೊಂದು ಸಂಕಷ್ಟ ತಂದೊಡ್ಡಿದೆ.

ಒಂದು ಕರೆಗೆ ಸಾವಿರಾರು ಮಹಿಳೆಯರ ಸ್ಪಂದನೆ: ಅನಿಲ ಮೆಣಸಿನಕಾಯಿಗೆ ರಾಖಿ ಕಟ್ಟಿ ವಿಶಿಷ್ಟ ರಕ್ಷಾ ಬಂಧನ ಆಚರಣೆ

0

ಗದಗ: ಸಹೋದರ-ಸಹೋದರಿಯರ ಪ್ರೀತಿ, ವಿಶ್ವಾಸ, ಆತ್ಮೀಯತೆ ಹಾಗೂ ರಕ್ಷಣೆಯ ಪವಿತ್ರ ಬಾಂಧವ್ಯವನ್ನು ಸಾರುವ ರಕ್ಷಾ ಬಂಧನ ಹಬ್ಬವನ್ನು ಯುವ ಮುಖಂಡ ಅನಿಲ ಮೆಣಸಿನಕಾಯಿ ಅವರ ನೇತೃತ್ವದಲ್ಲಿ ವಿಶಿಷ್ಟ ಹಾಗೂ ಅದ್ಧೂರಿಯಾಗಿ ಆಚರಿಸಲಾಯಿತು.

ಅನಿಲ ಮೆಣಸಿನಕಾಯಿ ಅವರ ಒಂದು ಕರೆಗೆ ಅಪಾರ ಸ್ಪಂದನೆ ವ್ಯಕ್ತವಾಗಿದ್ದು, ಸಾವಿರಾರು ಮಹಿಳೆಯರು ಕಾರ್ಯಕ್ರಮಕ್ಕೆ ಆಗಮಿಸಿ ಅವರಿಗೆ ರಾಖಿ ಕಟ್ಟಿ ಶುಭಾಶಯ ಕೋರಿದರು.

ಅವಳಿ ನಗರದ ವಿವಿಧ ಭಾಗಗಳಿಂದ ಆಗಮಿಸಿದ್ದ ಮಹಿಳೆಯರು ಸಂಭ್ರಮದಿಂದ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಅನಿಲ ಮೆಣಸಿನಕಾಯಿ ಅವರ ಕೈಗೆ ರಾಖಿ ಕಟ್ಟಿ ಸಹೋದರತ್ವದ ಬಾಂಧವ್ಯವನ್ನು ಗಟ್ಟಿಗೊಳಿಸಿದರು.

ಅವಳಿ ನಗರದ ಪ್ರಜ್ಞಾವಂತ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಅನಿಲ ಮೆಣಸಿನಕಾಯಿ ಅವರಿಗೆ ರಾಖಿ ಕಟ್ಟಿ ಶುಭ ಹಾರೈಸಿದರು. ಮಹಿಳೆಯರ ಅಭೂತಪೂರ್ವ ಸ್ಪಂದನೆ ಹಾಗೂ ಬಿಜೆಪಿ ಕಾರ್ಯಕರ್ತರ ಉತ್ಸಾಹಭರಿತ ಪಾಲ್ಗೊಳ್ಳುವಿಕೆ ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿ ಪರಿಣಮಿಸಿತು.

ಒಂದೇ ವೇದಿಕೆಯಲ್ಲಿ ಸಾವಿರಾರು ಮಹಿಳೆಯರು ಸೇರಿ ರಾಖಿ ಕಟ್ಟುವ ಮೂಲಕ ಯುವ ಮುಖಂಡನ ಮೇಲಿನ ತಮ್ಮ ಪ್ರೀತಿ, ವಿಶ್ವಾಸ ಮತ್ತು ಅಭಿಮಾನವನ್ನು ವ್ಯಕ್ತಪಡಿಸಿದರು. ಕಾರ್ಯಕ್ರಮದಾದ್ಯಂತ ಹಬ್ಬದ ವಾತಾವರಣ ನಿರ್ಮಾಣವಾಗಿದ್ದು, ಬಿಜೆಪಿ ಕಾರ್ಯಕರ್ತರು ಮತ್ತು ಮಹಿಳೆಯರ ಸಂಭ್ರಮದ ಪಾಲ್ಗೊಳ್ಳುವಿಕೆಯಿಂದ ರಕ್ಷಾ ಬಂಧನ ಆಚರಣೆ ಅತ್ಯಂತ ಯಶಸ್ವಿಯಾಗಿ ನೆರವೇರಿತು.

ಈ ಸಂದರ್ಭದಲ್ಲಿ ಮಹಿಳೆಯರ ಪ್ರೀತಿ ಮತ್ತು ವಿಶ್ವಾಸಕ್ಕೆ ಕೃತಜ್ಞತೆ ಸಲ್ಲಿಸಿದ ಯುವ ಮುಖಂಡ ಅನಿಲ ಮೆಣಸಿನಕಾಯಿ, ರಾಖಿ ಎಂಬುದು ಕೇವಲ ದಾರದ ಬಂಧನವಲ್ಲ, ಅದು ಸಹೋದರ-ಸಹೋದರಿಯರ ನಡುವಿನ ಪ್ರೀತಿ, ವಿಶ್ವಾಸ ಹಾಗೂ ರಕ್ಷಣೆಯ ಪವಿತ್ರ ಸಂಕೇತವಾಗಿದೆ. ಸಾವಿರಾರು ತಾಯಂದಿರು ಮತ್ತು ಸಹೋದರಿಯರು ನೀಡಿರುವ ಈ ಪ್ರೀತಿ ಹಾಗೂ ಆಶೀರ್ವಾದವನ್ನು ಸದಾ ಗೌರವದಿಂದ ಕಾಣುತ್ತೇನೆ. ಕಾರ್ಯಕ್ರಮದ ಯಶಸ್ಸಿಗೆ ಶ್ರಮಿಸಿದ ಸ್ನೇಹಿತರ ಹಾಗೂ ಅಭಿಮಾನಿಗಳ ಪ್ರೀತಿ ಮತ್ತು ಸಹಕಾರವೂ ಅವಿಸ್ಮರಣೀಯ ಎಂದು ಹೇಳಿದರು.

ಅರಬ್ಬೀ ಸಮುದ್ರದಲ್ಲಿ ಬೋಟ್‌ ಮುಳುಗಡೆ; 24 ಮಂದಿ ಮೀನುಗಾರರ ರಕ್ಷಣೆ!

0

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಅಂಜದೀವ್ ದ್ವೀಪದ ಸಮೀಪ ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕಾ ಬೋಟ್‌ವೊಂದು ಮುಳುಗಿದ್ದು, ಅದರಲ್ಲಿದ್ದ 24 ಮಂದಿ ಮೀನುಗಾರರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ.

ಬೆಳಂಬಾರ ಮೂಲದ ನೀಲಕಂಠ ಖಾರ್ವಿ ಅವರಿಗೆ ಸೇರಿದ ‘ಶ್ರೀ ಮಾತಾ’ ಹೆಸರಿನ ಮೀನುಗಾರಿಕಾ ಬೋಟ್‌ ಸಮುದ್ರದಲ್ಲಿ ಅವಘಡಕ್ಕೀಡಾಗಿ ಮುಳುಗಿದೆ ಎನ್ನಲಾಗಿದೆ.

ಬೋಟ್‌ ಅಪಾಯಕ್ಕೆ ಸಿಲುಕಿರುವುದನ್ನು ಗಮನಿಸಿದ ಸಮೀಪದಲ್ಲಿದ್ದ ಐದಾರು ಮೀನುಗಾರಿಕಾ ಬೋಟ್‌ಗಳ ಸಿಬ್ಬಂದಿ ತಕ್ಷಣ ಕಾರ್ಯಾಚರಣೆಗೆ ಮುಂದಾಗಿದ್ದಾರೆ. ಸಮಯೋಚಿತವಾಗಿ ನಡೆಸಿದ ರಕ್ಷಣಾ ಕಾರ್ಯಾಚರಣೆಯಿಂದ ಬೋಟ್‌ನಲ್ಲಿದ್ದ 24 ಮಂದಿ ಮೀನುಗಾರರನ್ನು ಸುರಕ್ಷಿತವಾಗಿ ದಡಕ್ಕೆ ಕರೆತರಲಾಗಿದೆ.

ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

80 ಲಕ್ಷಕ್ಕೂ ಅಧಿಕ ನಷ್ಟ:

ಬೋಟ್‌ ಮುಳುಗಡೆಯಿಂದ ಮೀನುಗಾರಿಕಾ ಬೋಟ್‌ ಹಾಗೂ ಅದರಲ್ಲಿದ್ದ ಮೀನುಗಾರಿಕಾ ಪರಿಕರಗಳು ಸೇರಿದಂತೆ ₹80 ಲಕ್ಷಕ್ಕೂ ಅಧಿಕ ನಷ್ಟ ಸಂಭವಿಸಿದೆ ಎಂದು ತಿಳಿದುಬಂದಿದೆ.

ಸಮುದ್ರದಲ್ಲಿ ಅವಘಡ ಸಂಭವಿಸಿದ ವೇಳೆ ತಕ್ಷಣ ನೆರವಿಗೆ ಧಾವಿಸಿದ ಇತರೆ ಮೀನುಗಾರಿಕಾ ಬೋಟ್‌ಗಳ ಸಿಬ್ಬಂದಿಯ ಸಮಯೋಚಿತ ಕಾರ್ಯಾಚರಣೆಯಿಂದ ಭಾರಿ ಅನಾಹುತವೊಂದು ತಪ್ಪಿದೆ.

ಬೆಂಗಳೂರು ಫ್ಲೈಓವರ್‌ಗಳಲ್ಲಿ ಹೊಸ ರೂಲ್ಸ್; ಸೆ.4ರಿಂದ ಈ ವಾಹನಗಳಿಗೆ ಸಂಚಾರ ನಿರ್ಬಂಧ!

0

ಬೆಂಗಳೂರು: ನಗರದ ಪ್ರಮುಖ ಫ್ಲೈಓವರ್‌ಗಳು ಹಾಗೂ ಎಲಿವೇಟೆಡ್‌ ಕಾರಿಡಾರ್‌ಗಳಲ್ಲಿ ನಿರ್ದಿಷ್ಟ ವಾಹನಗಳ ಸಂಚಾರಕ್ಕೆ ಸಂಚಾರ ಪೊಲೀಸ್‌ ಇಲಾಖೆ ನಿರ್ಬಂಧ ವಿಧಿಸಿದೆ.

ರಸ್ತೆ ಸುರಕ್ಷತೆ ಹೆಚ್ಚಿಸುವುದು, ಸಂಚಾರ ದಟ್ಟಣೆ ನಿಯಂತ್ರಿಸುವುದು ಹಾಗೂ ಅಪಘಾತಗಳನ್ನು ಕಡಿಮೆ ಮಾಡುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ. ಹೊಸ ನಿಯಮಗಳು ಸೆಪ್ಟೆಂಬರ್‌ 4ರಿಂದ ಜಾರಿಗೆ ಬರಲಿದ್ದು, ಎಲೆಕ್ಟ್ರಾನಿಕ್‌ ಸಿಟಿ ಎಲಿವೇಟೆಡ್‌ ಕಾರಿಡಾರ್‌ನಲ್ಲಿ ಸೆಪ್ಟೆಂಬರ್‌ 11ರಿಂದ ಅನ್ವಯವಾಗಲಿದೆ.

ಬಿಜಿಎಸ್ ಫ್ಲೈಓವರ್‌, ಮೈಸೂರು ರಸ್ತೆ:

ಬಿಜಿಎಸ್ ಫ್ಲೈಓವರ್‌ನಲ್ಲಿ 24 ಗಂಟೆಯೂ ಭಾರಿ ಸರಕು ಸಾಗಣೆ ವಾಹನಗಳ ಸಂಚಾರಕ್ಕೆ ನಿರ್ಬಂಧವಿದೆ.

ಬೆಳಗ್ಗೆ 7ರಿಂದ 11 ಗಂಟೆವರೆಗೆ ಹಾಗೂ ಸಂಜೆ 4ರಿಂದ ರಾತ್ರಿ 10 ಗಂಟೆವರೆಗೆ ಮೂರು ಚಕ್ರದ ಗೂಡ್ಸ್‌ ಆಟೋ ಸೇರಿದಂತೆ ಇತರೆ ಸರಕು ಸಾಗಣೆ ವಾಹನಗಳಿಗೂ ನಿರ್ಬಂಧ ಹೇರಲಾಗಿದೆ.

ಪೀಣ್ಯ ಎಲಿವೇಟೆಡ್‌ ಕಾರಿಡಾರ್:

ಪೀಣ್ಯ ಎಲಿವೇಟೆಡ್‌ ಕಾರಿಡಾರ್‌ನಲ್ಲಿ ಪ್ರಯಾಣಿಕರ ಆಟೋರಿಕ್ಷಾ ಹಾಗೂ ತ್ರಿಚಕ್ರ ಗೂಡ್ಸ್‌ ಆಟೋಗಳ ಸಂಚಾರಕ್ಕೆ 24 ಗಂಟೆಯೂ ನಿಷೇಧವಿದೆ.

ಬೆಳಗ್ಗೆ 7ರಿಂದ 11 ಗಂಟೆ ಹಾಗೂ ಸಂಜೆ 4ರಿಂದ ರಾತ್ರಿ 10 ಗಂಟೆವರೆಗೆ ಭಾರಿ ಮತ್ತು ಮಧ್ಯಮ ಸರಕು ಸಾಗಣೆ ವಾಹನಗಳ ಸಂಚಾರಕ್ಕೂ ನಿರ್ಬಂಧ ವಿಧಿಸಲಾಗಿದೆ.

ಎಲೆಕ್ಟ್ರಾನಿಕ್‌ ಸಿಟಿ ಎಲಿವೇಟೆಡ್‌ ಕಾರಿಡಾರ್:

ಈ ಕಾರಿಡಾರ್‌ನಲ್ಲಿ ಬೆಳಗ್ಗೆ 6ರಿಂದ ರಾತ್ರಿ 10 ಗಂಟೆವರೆಗೆ ಭಾರಿ, ಮಧ್ಯಮ ಹಾಗೂ ಲಘು ಸರಕು ಸಾಗಣೆ ವಾಹನಗಳ ಸಂಚಾರಕ್ಕೆ ನಿರ್ಬಂಧವಿದೆ.

ಇದಲ್ಲದೆ, ದ್ವಿಚಕ್ರ ವಾಹನಗಳು, ಪ್ರಯಾಣಿಕರ ಆಟೋರಿಕ್ಷಾ ಹಾಗೂ ತ್ರಿಚಕ್ರ ಗೂಡ್ಸ್‌ ಆಟೋಗಳಿಗೆ 24 ಗಂಟೆಯೂ ಸಂಚಾರ ನಿಷೇಧಿಸಲಾಗಿದೆ. ಈ ನಿಯಮ ಸೆಪ್ಟೆಂಬರ್‌ 11ರಿಂದ ಜಾರಿಗೆ ಬರಲಿದೆ.

ಡಬಲ್‌ ಡೆಕ್ಕರ್‌ ಫ್ಲೈಓವರ್‌:

ಸಿಲ್ಕ್‌ ಬೋರ್ಡ್‌ನಿಂದ ರಾಗಿಗುಡ್ಡದವರೆಗೆ ಇರುವ ಡಬಲ್‌ ಡೆಕ್ಕರ್‌ ಫ್ಲೈಓವರ್‌ನಲ್ಲಿ ಭಾರಿ ಸರಕು ಸಾಗಣೆ ವಾಹನಗಳಿಗೆ 24 ಗಂಟೆಯೂ ಸಂಚಾರ ನಿರ್ಬಂಧಿಸಲಾಗಿದೆ.

ವಿಮಾನ ನಿಲ್ದಾಣ ರಸ್ತೆ ಎಲಿವೇಟೆಡ್‌ ಕಾರಿಡಾರ್:

ಸಂಜೀವ ನಗರ ಕ್ರಾಸ್‌ನಿಂದ ವಿದ್ಯಾಶಿಲ್ಪ ಜಂಕ್ಷನ್‌ವರೆಗೆ ಇರುವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆ ಎಲಿವೇಟೆಡ್‌ ಕಾರಿಡಾರ್‌ನಲ್ಲಿ ದ್ವಿಚಕ್ರ ವಾಹನಗಳು ಹಾಗೂ ಆಟೋರಿಕ್ಷಾಗಳಿಗೆ 24 ಗಂಟೆಯೂ ನಿರ್ಬಂಧವಿದೆ.

ಬೆಳಗ್ಗೆ 6ರಿಂದ ರಾತ್ರಿ 10 ಗಂಟೆವರೆಗೆ ಎಲ್ಲಾ ರೀತಿಯ ಸರಕು ಸಾಗಣೆ ವಾಹನಗಳ ಸಂಚಾರಕ್ಕೂ ನಿಷೇಧ ಹೇರಲಾಗಿದೆ.

ನಗರದ ಪ್ರಮುಖ ಮೇಲ್ಸೇತುವೆಗಳಲ್ಲಿ ಸಂಚಾರ ಸುರಕ್ಷತೆ ಹಾಗೂ ಸುಗಮ ವಾಹನ ಸಂಚಾರಕ್ಕೆ ಒತ್ತು ನೀಡುವ ಉದ್ದೇಶದಿಂದ ಈ ಹೊಸ ನಿರ್ಬಂಧಗಳನ್ನು ಜಾರಿಗೊಳಿಸಲಾಗುತ್ತಿದೆ ಎಂದು ಸಂಚಾರ ಪೊಲೀಸ್‌ ಇಲಾಖೆ ತಿಳಿಸಿದೆ.

ಯುವಕನ ಹೊಟ್ಟೆಯಲ್ಲಿ ಲೈಟರ್, ಬ್ಯಾಟರಿ, ಕೀಗಳು! ಮರಣೋತ್ತರ ಪರೀಕ್ಷೆಯಲ್ಲಿ ಹೊರಬಿತ್ತು ಅಚ್ಚರಿಯ ಸಂಗತಿ

0

ಚಿಕ್ಕಬಳ್ಳಾಪುರ: ಅನುಮಾನಾಸ್ಪದವಾಗಿ ಮೃತಪಟ್ಟ ಯುವಕನ ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರೇ ಬೆಚ್ಚಿಬಿದ್ದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಪಟ್ಟಣದಲ್ಲಿ ನಡೆದಿದೆ.

28 ವರ್ಷದ ಯುವಕನ ಹೊಟ್ಟೆಯಲ್ಲಿ ಲೈಟರ್, ಬ್ಯಾಟರಿ ಸೆಲ್, ಬೀಗದ ಕೀಗಳು ಸೇರಿದಂತೆ ಹಲವು ಲೋಹದ ವಸ್ತುಗಳು ಪತ್ತೆಯಾಗಿವೆ.

ಗುಡಿಬಂಡೆ ಪಟ್ಟಣದ ಬಾಪೂಜಿನಗರದಲ್ಲಿ ಮಹೇಶ್ ಎಂಬ ಯುವಕ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಮೂಲತಃ ಚಿಕ್ಕಬಳ್ಳಾಪುರ ತಾಲೂಕಿನ ನಲ್ಲಕದಿರೇನಹಳ್ಳಿ ಗ್ರಾಮದ ನಿವಾಸಿಯಾಗಿದ್ದ ಮಹೇಶ್, ಕಳೆದ ಕೆಲವು ದಿನಗಳಿಂದ ಅಕ್ಕನ ಮನೆಯಲ್ಲಿ ವಾಸವಾಗಿದ್ದರು.

ಮನೆಯಲ್ಲಿ ಯಾರೂ ಇಲ್ಲದ ವೇಳೆ ಮಹೇಶ್ ನೇಣು ಬಿಗಿದುಕೊಂಡಿದ್ದರು ಎನ್ನಲಾಗಿದೆ. ಆದರೆ ಮೃತದೇಹ ನೆಲದ ಮೇಲೆ ಪತ್ತೆಯಾಗಿರುವುದು ಪೊಲೀಸರ ಅನುಮಾನಕ್ಕೆ ಕಾರಣವಾಗಿದೆ. ಹೀಗಾಗಿ ಇದು ಆತ್ಮಹತ್ಯೆಯೋ ಅಥವಾ ಸಾವಿನ ಹಿಂದೆ ಬೇರೆ ಕಾರಣವಿದೆಯೇ ಎಂಬುದನ್ನು ಪತ್ತೆಹಚ್ಚಲು ಮೃತದೇಹವನ್ನು ಗುಡಿಬಂಡೆ ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿತ್ತು.

ಹೊಟ್ಟೆಯಲ್ಲಿ ಲೈಟರ್, ಬ್ಯಾಟರಿ ಸೆಲ್, ಕೀಗಳು!

ಮರಣೋತ್ತರ ಪರೀಕ್ಷೆ ವೇಳೆ ವೈದ್ಯರು ಮೃತನ ಹೊಟ್ಟೆಯನ್ನು ಪರಿಶೀಲಿಸಿದಾಗ ಲೈಟರ್, ಬ್ಯಾಟರಿ ಸೆಲ್, ಬೀಗದ ಕೀಗಳು, ಹೇರ್‌ಪಿನ್, ಔಷಧಿ ಟ್ಯೂಬ್‌ಗಳು ಹಾಗೂ ಕಬ್ಬಿಣದ ಚೂರುಗಳು ಸೇರಿದಂತೆ ಹಲವು ವಸ್ತುಗಳು ಪತ್ತೆಯಾಗಿವೆ ಎನ್ನಲಾಗಿದೆ.

ಇಷ್ಟೊಂದು ವಸ್ತುಗಳು ಯುವಕನ ಹೊಟ್ಟೆಯೊಳಗೆ ಹೇಗೆ ಸೇರಿದವು ಎಂಬುದು ಇದೀಗ ಪೊಲೀಸರ ತನಿಖೆಯ ಪ್ರಮುಖ ಅಂಶವಾಗಿದೆ. ಪತ್ತೆಯಾದ ವಸ್ತುಗಳನ್ನು ಹೊರತೆಗೆಯಲಾಗಿದೆ.

ಸಾಲದ ಸಮಸ್ಯೆ ಇತ್ತಾ?

ಮಹೇಶ್‌ಗೆ ಸಾಲದ ಸಮಸ್ಯೆ ಇತ್ತು ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಈ ಹಿಂದೆಯೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಎಂದು ಕುಟುಂಬದವರು ಹೇಳಿದ್ದಾರೆ. ಆದರೆ ತಮ್ಮ ಎದುರು ಮಹೇಶ್ ಯಾವುದೇ ವಸ್ತುಗಳನ್ನು ನುಂಗಿರುವುದನ್ನು ನೋಡಿಲ್ಲ ಎಂದು ಅವರು ತಿಳಿಸಿದ್ದಾರೆ.

ಸದ್ಯ ಗುಡಿಬಂಡೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಮಹೇಶ್‌ ಸಾವಿನ ಹಿಂದೆ ಆತ್ಮಹತ್ಯೆಯೇ ಅಥವಾ ಬೇರೆ ಯಾವುದಾದರೂ ಕಾರಣವಿದೆಯೇ ಎಂಬುದನ್ನು ಪೊಲೀಸರು ವಿವಿಧ ಆಯಾಮಗಳಲ್ಲಿ ಪರಿಶೀಲಿಸುತ್ತಿದ್ದಾರೆ.

ಬರ ಪರಿಹಾರ, ಕುಡಿಯುವ ನೀರು-ಉದ್ಯೋಗಕ್ಕೆ ಆಗ್ರಹಿಸಿ ಗದಗದ ಹಕ್ಕಿಗಾಗಿ ನಾಳೆ ಬೃಹತ್ ಜನಪಾದಯಾತ್ರೆ

ಗದಗ: ಜಿಲ್ಲೆಯ ರೈತರಿಗೆ ಬರ ಪರಿಹಾರ, ಗದಗ–ಬೆಟಗೇರಿ ಜನತೆಗೆ ಶಾಶ್ವತ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಜಿಲ್ಲೆಯ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವಂತೆ ಒತ್ತಾಯಿಸಿ GEN Z Voters and Citizens Forum, Gadag ವತಿಯಿಂದ ಆಗಸ್ಟ್ 31ರಂದು ಸೋಮವಾರ ಬೃಹತ್ ಶಾಂತಿಯುತ “ಗದಗದ ಹಕ್ಕಿಗಾಗಿ ಜನಪಾದಯಾತ್ರೆ” ಹಮ್ಮಿಕೊಳ್ಳಲಾಗಿದೆ.

ಸೋಮವಾರ ಬೆಳಿಗ್ಗೆ 10.30ಕ್ಕೆ ನಗರದ ರಾಣಿ ಚೆನ್ನಮ್ಮ ವೃತ್ತದಿಂದ ಆರಂಭವಾಗುವ ಪಾದಯಾತ್ರೆಯು ಜಿಲ್ಲಾಧಿಕಾರಿಗಳ ಕಚೇರಿವರೆಗೆ ಸಾಗಲಿದೆ. ಜಿಲ್ಲೆಯ ರೈತರು, ಯುವಕರು, ಮಹಿಳೆಯರು ಹಾಗೂ ನಾಗರಿಕರು ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳನ್ನು ಜಿಲ್ಲಾಡಳಿತದ ಮೂಲಕ ರಾಜ್ಯ ಸರ್ಕಾರದ ಗಮನಕ್ಕೆ ತರುವ ಉದ್ದೇಶದಿಂದ ಈ ಜನಾಂದೋಲನಕ್ಕೆ ರೂಪ ನೀಡಲಾಗಿದೆ.

ಗದಗ ಜಿಲ್ಲೆಯ ಜನರು ಎದುರಿಸುತ್ತಿರುವ ಕುಡಿಯುವ ನೀರಿನ ಸಮಸ್ಯೆ, ರೈತರ ಕೃಷಿ ಸಂಕಷ್ಟ ಹಾಗೂ ಯುವಕರ ನಿರುದ್ಯೋಗದಂತಹ ವಿಷಯಗಳು ಯಾವುದೇ ಒಂದು ವರ್ಗ ಅಥವಾ ಸಂಘಟನೆಗೆ ಸೀಮಿತವಾಗಿಲ್ಲ. ಪಕ್ಷ, ಜಾತಿ, ಧರ್ಮ ಹಾಗೂ ವೈಯಕ್ತಿಕ ಭಿನ್ನಾಭಿಪ್ರಾಯಗಳನ್ನು ಮೀರಿ ಗದಗದ ಜನರ ಸಾಮೂಹಿಕ ಹಕ್ಕಿನ ಹೋರಾಟವಾಗಿ ಪಾದಯಾತ್ರೆ ನಡೆಸಲಾಗುತ್ತಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಮಳೆಯ ಕೊರತೆ ಹಾಗೂ ಕೃಷಿ ಸಂಕಷ್ಟದಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಸರ್ಕಾರ ವಾಸ್ತವ ಪರಿಸ್ಥಿತಿಯ ಸಮಗ್ರ ಸಮೀಕ್ಷೆ ನಡೆಸಿ ಅರ್ಹ ಪ್ರದೇಶಗಳಿಗೆ ಬರ ಪರಿಹಾರ ಘೋಷಿಸಬೇಕು. ಸಂಕಷ್ಟದಲ್ಲಿರುವ ರೈತರಿಗೆ ಸೂಕ್ತ ವಿಶೇಷ ನೆರವು ನೀಡಬೇಕು ಎಂದು ಆಗ್ರಹಿಸಲಾಗುವುದು.

ದಶಕಗಳಿಂದ ಗದಗ–ಬೆಟಗೇರಿ ಜನತೆ ಎದುರಿಸುತ್ತಿರುವ ಕುಡಿಯುವ ನೀರಿನ ಸಮಸ್ಯೆಗೆ ತಾತ್ಕಾಲಿಕ ಪರಿಹಾರಗಳ ಬದಲಾಗಿ ವೈಜ್ಞಾನಿಕ ಹಾಗೂ ಶಾಶ್ವತ ನೀರು ಸರಬರಾಜು ಯೋಜನೆ ರೂಪಿಸಿ ಜಾರಿಗೊಳಿಸಬೇಕು ಎಂಬುದು ಜನಪಾದಯಾತ್ರೆಯ ಪ್ರಮುಖ ಬೇಡಿಕೆಗಳಲ್ಲಿ ಒಂದಾಗಿದೆ.

ಅಲ್ಲದೆ, ಜಿಲ್ಲೆಯ ಯುವಕರು ಉದ್ಯೋಗ ಅರಸಿ ಬೇರೆ ನಗರಗಳಿಗೆ ವಲಸೆ ಹೋಗುವ ಪರಿಸ್ಥಿತಿ ತಪ್ಪಿಸಲು ಗದಗ ಜಿಲ್ಲೆಗೆ ಹೊಸ ಕೈಗಾರಿಕೆಗಳನ್ನು ಆಕರ್ಷಿಸುವ ವಿಶೇಷ ಯೋಜನೆ ರೂಪಿಸಬೇಕು. ಸ್ಥಳೀಯ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಲಾಗುವುದು.

ಕಪ್ಪತಗುಡ್ಡ ಪ್ರದೇಶದಲ್ಲಿರುವ ಔಷಧೀಯ ಸಸ್ಯ ಸಂಪತ್ತಿನ ಸಾಮರ್ಥ್ಯವನ್ನು ವೈಜ್ಞಾನಿಕವಾಗಿ ಬಳಸಿಕೊಂಡು ಆಯುರ್ವೇದ ಸಂಶೋಧನೆ ಹಾಗೂ ಸಂಬಂಧಿತ ಕೈಗಾರಿಕೆಗಳ ಅಭಿವೃದ್ಧಿಗೆ ಆದ್ಯತೆ ನೀಡಬೇಕೆಂಬ ಬೇಡಿಕೆಯನ್ನೂ ಸಂಘಟನೆ ಮುಂದಿಟ್ಟಿದೆ.

ಗ್ರಾಮೀಣ ಭಾಗದ ರೈತರಿಗೆ ನೀರಾವರಿ ಸೌಲಭ್ಯಗಳನ್ನು ವಿಸ್ತರಿಸುವುದರೊಂದಿಗೆ ಬಾಕಿ ಇರುವ ಹಾಗೂ ಅಗತ್ಯವಿರುವ ನೀರಾವರಿ ಯೋಜನೆಗಳಿಗೆ ಸರ್ಕಾರ ಆದ್ಯತೆ ನೀಡಬೇಕು. ರೈತರಿಗೆ ದೀರ್ಘಕಾಲೀನ ಕೃಷಿ ಭದ್ರತೆ ಕಲ್ಪಿಸಬೇಕು ಎಂದು ಪಾದಯಾತ್ರೆಯ ಮೂಲಕ ಸರ್ಕಾರವನ್ನು ಆಗ್ರಹಿಸಲಾಗುವುದು.

ಕಳೆದ ಹಲವು ದಿನಗಳಿಂದ ಗದಗ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಯುವಕರು, ಮಹಿಳೆಯರು, ರೈತರು ಮತ್ತು ನಾಗರಿಕರು ಸ್ವಯಂಪ್ರೇರಿತರಾಗಿ ಅಭಿಯಾನದಲ್ಲಿ ಪಾಲ್ಗೊಂಡು ಬೆಂಬಲ ವ್ಯಕ್ತಪಡಿಸಿದ್ದಾರೆ. ಜನರ ಸಹಿಯೊಂದಿಗೆ ಸಂಗ್ರಹಿಸಲಾದ ಮನವಿಯನ್ನು ಜಿಲ್ಲಾಡಳಿತದ ಮೂಲಕ ರಾಜ್ಯ ಸರ್ಕಾರದ ಗಮನಕ್ಕೆ ತರುವ ಮಹತ್ವದ ಹೆಜ್ಜೆಯಾಗಿ ಜನಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ.

ಪಾದಯಾತ್ರೆಯ ಅಂತ್ಯದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ, ಜಿಲ್ಲೆಯ ರೈತರು, ಯುವಕರು, ಮಹಿಳೆಯರು ಹಾಗೂ ನಾಗರಿಕರ ಪ್ರಮುಖ ಬೇಡಿಕೆಗಳನ್ನು ಒಳಗೊಂಡ ವಿವರವಾದ ಮನವಿಪತ್ರವನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಲಾಗುವುದು.

ಗದಗ ಜಿಲ್ಲೆಯ ರೈತ ಸಂಘಟನೆಗಳು, ಯುವ ಸಂಘಟನೆಗಳು, ಮಹಿಳಾ ಸಂಘಟನೆಗಳು, ಕನ್ನಡಪರ ಸಂಘಟನೆಗಳು, ಕಾರ್ಮಿಕ ಸಂಘಟನೆಗಳು, ವ್ಯಾಪಾರಸ್ಥರ ಸಂಘಗಳು, ಆಟೋ ಚಾಲಕರ ಸಂಘಗಳು, ವಕೀಲರ ಸಂಘಗಳು, ವಿದ್ಯಾರ್ಥಿ ಸಂಘಟನೆಗಳು, ಸಾಮಾಜಿಕ ಹಾಗೂ ಸಾಂಸ್ಕೃತಿಕ ಸಂಘಟನೆಗಳು ಸೇರಿದಂತೆ ಸಾರ್ವಜನಿಕ ಹಿತಾಸಕ್ತಿಗಾಗಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಸಂಘ-ಸಂಸ್ಥೆಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾದಯಾತ್ರೆಯಲ್ಲಿ ಭಾಗವಹಿಸುವಂತೆ ಸಂಘಟಕರು ಮನವಿ ಮಾಡಿದ್ದಾರೆ.

“ನಮ್ಮ ಹೋರಾಟ ವ್ಯಕ್ತಿಗಳ ವಿರುದ್ಧವಲ್ಲ, ಜನರ ಸಮಸ್ಯೆಗಳ ವಿರುದ್ಧ. ಅಧಿಕಾರಕ್ಕಾಗಿ ಅಲ್ಲ, ಜನರ ಹಕ್ಕಿಗಾಗಿ. ಪ್ರಚಾರಕ್ಕಾಗಿ ಅಲ್ಲ, ಸಮಸ್ಯೆಗಳಿಗೆ ಶಾಶ್ವತ ಪರಿಹಾರಕ್ಕಾಗಿ. ಪಕ್ಷಕ್ಕಿಂತ ಗದಗ ದೊಡ್ಡದು. ರಾಜಕೀಯಕ್ಕಿಂತ ಜನರ ಬದುಕು ದೊಡ್ಡದು. ಆದ್ದರಿಂದ ಗದಗದ ನ್ಯಾಯಸಮ್ಮತ ಹಕ್ಕುಗಳಿಗಾಗಿ ಎಲ್ಲರೂ ಒಂದಾಗಿ ಹೆಜ್ಜೆ ಹಾಕಬೇಕು” ಎಂದು GEN Z Voters and Citizens Forum, Gadag ಸಂಘಟಕರು ಕರೆ ನೀಡಿದ್ದಾರೆ.

“ಒಂದು ಹೆಜ್ಜೆ ಗದಗಕ್ಕಾಗಿ – ಒಂದು ಧ್ವನಿ ನ್ಯಾಯಕ್ಕಾಗಿ” ಎಂಬ ಘೋಷಣೆಯೊಂದಿಗೆ ಸೋಮವಾರ ನಡೆಯಲಿರುವ ಜನಪಾದಯಾತ್ರೆಯಲ್ಲಿ ಗದಗದ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಲಾಗಿದೆ.

ಗದಗ: ಹರಿಜಾತ್ರೋತ್ಸವ ಯಶಸ್ಸಿಗೆ ಶ್ರಮಿಸಿದ ಸೇವಕರಿಗೆ ಅದ್ದೂರಿ ಸನ್ಮಾನ!

0

ಗದಗ: ಅವಳಿ ನಗರದ ಗ್ರಾಮ ದೇವತೆಯರಾದ ಶ್ರೀ ದ್ಯಾಮವ್ವ ಹಾಗೂ ಶ್ರೀ ದುರ್ಗಮ್ಮ ದೇವಿಯರ ಹರಿಜಾತ್ರೋತ್ಸವ ಕಾರ್ಯಕ್ರಮ ಒಂಬತ್ತು ದಿನಗಳ ಕಾಲ ಅದ್ದೂರಿಯಾಗಿ ಸಂಭ್ರಮ-ಸಡಗರದಿಂದ ಜರುಗಿತು.

ಜಾತ್ರಾ ಮಹೋತ್ಸವದುದ್ದಕ್ಕೂ ಹಗಲು-ರಾತ್ರಿ ನಿರಂತರವಾಗಿ ಶ್ರಮಿಸಿ ಜಾತ್ರೆ ಯಶಸ್ವಿಯಾಗಲು ಕಾರಣರಾದ ದಾನಿಗಳು, ಶ್ರಮಿಕರು ಹಾಗೂ ಸೇವಕರನ್ನು ಜಾತ್ರಾ ಸಮಿತಿಯು ಸನ್ಮಾನಿಸಿ ಗೌರವಿಸಿತು.

ಓಕ್ಕಲಗೇರಿ ಓಣಿಯಲ್ಲಿರುವ ದ್ಯಾಮವ್ವನ ಕಟ್ಟಿಯ ಆವರಣದಲ್ಲಿ ಜಾತ್ರಾ ಸಮಿತಿಯಿಂದ ವಿಶೇಷ ಗೌರವ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸ್ವಚ್ಛತೆಯ ಮೂಲಕ ಒಂಬತ್ತು ದಿನಗಳ ಕಾಲ ಗ್ರಾಮ ದೇವತೆಯರ ಸೇವೆ ಸಲ್ಲಿಸಿದ ಪೌರಕಾರ್ಮಿಕರು, ಛಾಯಾಗ್ರಾಹಕರು, ಕೆ.ಇ.ಬಿ. ಸಿಬ್ಬಂದಿ, ಅಡುಗೆ ಭಟ್ಟರು ಹಾಗೂ ಅವರ ಸಹಾಯಕರು, ಪಾತ್ರೆ ಸ್ವಚ್ಛಗೊಳಿಸುವವರು, ಪ್ರಸಾದ ಉಣಬಡಿಸಿದವರು ಹಾಗೂ ತೆಂಗಿನಕಾಯಿ ಒಡೆಯುವವರಿಗೆ ಸನ್ಮಾನಿಸಿ ನೆನಪಿನ ಕಾಣಿಕೆ ನೀಡಲಾಯಿತು.

ಜಾತ್ರೆಯಲ್ಲಿ ಅವಿರತವಾಗಿ ದುಡಿದ ಗಂಜೀ ಬಸವೇಶ್ವರ ಮಿತ್ರ ಮಂಡಳಿಯ ಸದಸ್ಯರು, ದೇವಸ್ಥಾನದ ಅರ್ಚಕರು ಹಾಗೂ ಕಾರ್ಯಕರ್ತರಿಗೂ ಗೌರವ ಸಮರ್ಪಿಸಲಾಯಿತು. ಹರಿಜಾತ್ರೋತ್ಸವ ಕಮಿಟಿಯ ಈ ಕಾರ್ಯದಿಂದ ಭಕ್ತಿ-ಭಾವದಿಂದ ಸೇವೆ ಸಲ್ಲಿಸಿದವರೆಲ್ಲರೂ ಸಂತಸದಿಂದ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಧನ ಸಹಾಯ ಮಾಡಿದವರ ಜೊತೆಗೆ ತನು-ಮನದಿಂದ ಜಾತ್ರೆಯಲ್ಲಿ ಭಾಗಿಯಾಗಿ ಸೇವೆ ಸಲ್ಲಿಸಿದವರನ್ನೂ ಗುರುತಿಸಿ ಗೌರವಿಸಿರುವ ಕೀರ್ತಿ ಜಾತ್ರಾ ಕಮಿಟಿಯ ಸದಸ್ಯರಿಗೆ ಸಲ್ಲುತ್ತದೆ. ಜಾತ್ರೆಯ ಯಶಸ್ಸಿನ ಹಿಂದೆ ತೆರೆಮರೆಯಲ್ಲಿ ಶ್ರಮಿಸಿದ ಪ್ರತಿಯೊಬ್ಬರ ಸೇವೆಯನ್ನು ಸ್ಮರಿಸಿ ಗೌರವಿಸಿರುವುದು ವಿಶೇಷವಾಗಿತ್ತು.

ಪ್ರತಿ ಹನ್ನೆರಡು ವರ್ಷಕ್ಕೊಮ್ಮೆ ನಡೆಯಬೇಕಿದ್ದ ಈ ಜಾತ್ರೆ ಪ್ರಸಕ್ತ ವರ್ಷ ಹದಿನೆಂಟು ವರ್ಷಗಳ ಬಳಿಕ ಅದ್ದೂರಿಯಾಗಿ ಜರುಗಿತು. ಭಕ್ತರು ನಿರೀಕ್ಷೆಗೂ ಮೀರಿ ತನು-ಮನ-ಧನದಿಂದ ಭಾಗಿಯಾಗಿ ನಾಡಿನಾದ್ಯಂತ ಗದಗ-ಬೆಟಗೇರಿಯ ಗ್ರಾಮ ದೇವತೆಯರ ಜಾತ್ರೆ ವಿಜೃಂಭಣೆಯಿಂದ ನಡೆಯಲು ಪ್ರಮುಖ ಕಾರಣರಾದರು.

ಉಡಿ ತುಂಬುವ ಕಾರ್ಯಕ್ರಮದಲ್ಲಂತೂ ಸಹಸ್ರಾರು ಸಂಖ್ಯೆಯಲ್ಲಿ ಮುತೈದೆಯರು ಭಾಗವಹಿಸಿದ್ದು ಜಾತ್ರೆಯ ಮತ್ತೊಂದು ವಿಶೇಷವಾಗಿತ್ತು. ಭಕ್ತಿ, ಸಂಭ್ರಮ ಮತ್ತು ಸಾಂಪ್ರದಾಯಿಕ ವೈಭವದೊಂದಿಗೆ ನಡೆದ ಹರಿಜಾತ್ರೋತ್ಸವ ಜನಮನ ಸೆಳೆಯುವಲ್ಲಿ ಯಶಸ್ವಿಯಾಯಿತು.

ನಾಡಿನ ಗಮನ ಸೆಳೆದ ಭಂಡಾರ ಜಾತ್ರೆ:

2026ರ ಹರಿಜಾತ್ರೋತ್ಸವದಲ್ಲಿ ಈ ಬಾರಿ ಭಂಡಾರ ಜಾತ್ರೆ ನಾಡಿನ ಗಮನ ಸೆಳೆಯಿತು. ಭಕ್ತರು ನೀಡಿದ ಸುಮಾರು 17 ಟನ್‌ಗೂ ಅಧಿಕ ಭಂಡಾರದಲ್ಲಿ ಭಕ್ತರು ಮಿಂದೆದ್ದರು. ಪ್ರತಿ ಗಲ್ಲಿ-ಗಲ್ಲಿಗಳೂ ಹಳದಿ ಭಂಡಾರಮಯವಾಗಿದ್ದು, ಜಾತ್ರೆಯ ವೈಭವಕ್ಕೆ ಮತ್ತಷ್ಟು ಮೆರುಗು ನೀಡಿತು.

ಹೀಗೆ ಹತ್ತು-ಹಲವಾರು ಕಾರ್ಯಕ್ರಮಗಳ ಯಶಸ್ವಿಗಾಗಿ ಶ್ರಮಿಸಿದವರನ್ನು ಗುರುತಿಸಿ ಗೌರವಿಸಿರುವುದು ಜಾತ್ರೋತ್ಸವದ ಅವಿಸ್ಮರಣೀಯ ಕ್ಷಣವಾಗಿತ್ತು.

ಶ್ರೀಧರ ವಜ್ರಬಂಡಿ, ರಾಜು ಖಾನಪ್ಪನವರ, ವೀರಣ್ಣ ಮೇಟಿ, ಮಂಜು ಅಂತರಗೊಂಡ, ಚೇತನ್ ಅಬ್ಬಿಗೇರಿ, ಮಲ್ಲು ಮಹಾಂತಶೆಟ್ಟರ, ಮಂಜುನಾಥ ಕುರ್ತಕೋಟಿ, ಈಶ್ವರ ಹಳ್ಳಿ, ಕಿರಣ್ ಕಮತರ, ಪರಶುರಾಮ ಹಳ್ಳದ, ನರಸಪ್ಪ ತುಕ್ಕಪ್ಪನವರ, ಬಸವರಾಜ ಹುಬ್ಬಳ್ಳಿ, ನಾಗರಾಜ ಮೇಣಸಗಿ, ವೀರೂಪಾಕ್ಷಪ್ಪ ಹೆಬ್ಬಳ್ಳಿ, ಮಹೇಶ ರೋಖಡೆ, ಸುರೇಶ ಹೆಬಸೂರ, ಪಂಚಾಕ್ಷರಿ ಅಂಗಡಿ ಸೇರಿದಂತೆ ನೂರಾರು ಕಾರ್ಯಕರ್ತರು ತಮ್ಮ ಅಮೂಲ್ಯ ಸೇವೆ ಸಲ್ಲಿಸುವ ಮೂಲಕ ಜಾತ್ರೆಯ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದರು.

ಈ ಬಗ್ಗೆ ಜಾತ್ರಾ ಕಮಿಟಿ ಸಹ ಕಾರ್ಯದರ್ಶಿ ನವೀನ ನಾಲ್ವಾಡ ಮಾತನಾಡಿ, “ಹರಿಜಾತ್ರೋತ್ಸವದಲ್ಲಿ ಭಾಗವಹಿಸಿ ಗ್ರಾಮ ದೇವತೆಯರ ಸೇವೆ ಸಲ್ಲಿಸುವ ಅವಕಾಶ ದೊರಕಿದ್ದು ನನ್ನ ಪೂರ್ವಜನ್ಮದ ಪುಣ್ಯ ಎಂದು ಭಾವಿಸುತ್ತೇನೆ. ನಾಡಿನಾದ್ಯಂತ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿ ಜಾತ್ರೆಯನ್ನು ಯಶಸ್ವಿಗೊಳಿಸಿದ್ದಾರೆ” ಎಂದು ಹೇಳಿದರು.

ಈ ಬಗ್ಗೆ ಜಾತ್ರಾ ಕಮಿಟಿಯ ಸಹ ಸಂಘಟನಾ ಕಾರ್ಯದರ್ಶಿ ಹೇಮಂತ ಗಿಡ್ಡಹನುಮಣ್ಣನವರ ಮಾತನಾಡಿ, “12 ವರ್ಷಕ್ಕೊಮ್ಮೆ ನಡೆಯಬೇಕಿದ್ದ ಜಾತ್ರೆ ಈ ವರ್ಷ 18 ವರ್ಷಗಳ ಬಳಿಕ ಸಂಪನ್ನವಾಗಿದೆ. ಹಿರಿಯರ ಮಾರ್ಗದರ್ಶನ ಹಾಗೂ ಭಕ್ತರ ಸಹಕಾರದೊಂದಿಗೆ ಜಾತ್ರೆ ಯಶಸ್ವಿಯಾಗಿದೆ. ಯಾವುದೇ ಜಾತಿ-ಧರ್ಮದ ಭೇದವಿಲ್ಲದೆ ಜಾತ್ರೆ ಅದ್ದೂರಿಯಾಗಿ ನಡೆದಿರುವುದು ಮತ್ತೊಂದು ವಿಶೇಷ. ಮುಂಬರುವ ಜಾತ್ರೆ ಇನ್ನಷ್ಟು ಅದ್ದೂರಿಯಾಗಿ ನಡೆಯಲಿ” ಎಂದು ಹೇಳಿದರು.

ಈ ಬಗ್ಗೆ ಜಾತ್ರಾ ಕಮಿಟಿ ಸಹ ಕಾರ್ಯದರ್ಶಿ ಬಸವರಾಜ ಮಡಿವಾಳರ ಮಾತನಾಡಿ, “ಅವಳಿ ನಗರದ ಗ್ರಾಮ ದೇವತೆಯರ ಜಾತ್ರೆ ನಾಡಿನ ಹೆಸರಾಂತ ಜಾತ್ರೆಗಳಲ್ಲಿ ಒಂದಾಗಿದೆ. ಹಿಂದಿನ ಎಲ್ಲ ಜಾತ್ರೆಗಳಿಗಿಂತ ಈ ಬಾರಿಯ ಜಾತ್ರೆ ವಿಶಿಷ್ಟವಾಗಿ ಪೂರ್ಣಗೊಂಡಿದೆ. ಜಾತ್ರೆಯ ಯಶಸ್ಸಿನ ಹಿಂದೆ ಮಹಿಳೆಯರ ಪಾತ್ರ ಬಹಳ ಪ್ರಮುಖವಾಗಿತ್ತು. ಪ್ರತಿದಿನ ಸಾಂಸ್ಕೃತಿಕ ಕಾರ್ಯಕ್ರಮಗಳು ಯಶಸ್ವಿಯಾಗಿ ಜರುಗಿದವು. ನಿರೀಕ್ಷೆಗೂ ಮೀರಿ ಜಾತ್ರೆ ಯಶಸ್ವಿಯಾಗಿದೆ” ಎಂದು ಹೇಳಿದರು.