ಗದಗ: ಕೊಪ್ಪಳದಲ್ಲಿ ನಡೆಯಲಿರುವ ಈದ್ ಮಿಲಾದ್ ಹಬ್ಬದ ಮೆರವಣಿಗೆ ವೀಕ್ಷಿಸಲು ನರಗುಂದದಿಂದ ಬೈಕ್ನಲ್ಲಿ ತೆರಳುತ್ತಿದ್ದ ಮೂವರು ಯುವಕರು ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಕೊಪ್ಪಳ ಜಿಲ್ಲೆಯ ಬನ್ನಿಕೊಪ್ಪ ಗ್ರಾಮದ ಬಳಿ ನಡೆದಿದೆ.
ಇಂದು ಮುಂಜಾನೆ ನರಗುಂದದಿಂದ ಕೊಪ್ಪಳದತ್ತ ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟಾಟಾ ಏಸ್ ವಾಹನಕ್ಕೆ ಬೈಕ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್ನಲ್ಲಿದ್ದ ಮೂವರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರನ್ನು ನರಗುಂದ ಪಟ್ಟಣದ ಹೊರಕೆರೆ ಓಣಿಯ ಶಾನುಸಾಬ ತಂದೆ ಮಕ್ತುಮಸಾಬ ಬಸಾಪೂರ (15) ಮಾಬುಸಾಬ ತಂದೆ ಬುಡನಸಾಬ ಮಟಗೇರಿ (17) ಹಾಗೂ ಹೊಸೂರ ಓಣಿಯ ಫಕ್ರುಸಾಬ್ ತಂದೆ ಹಸನಸಾಬ ಮಟಗೇರಿ (18) ಎಂದು ಪೊಲೀಸರು ತಿಳಿಸಿದ್ದಾರೆ.
ಮೂವರು ಯುವಕರು ಈದ್ ಮಿಲಾದ್ ಹಬ್ಬದ ಮೆರವಣಿಗೆ ವೀಕ್ಷಿಸಲು ಕೊಪ್ಪಳಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ. ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಮೃತರ ಕುಟುಂಬಸ್ಥರು, ಸಂಬಂಧಿಕರು ಹಾಗೂ ಸ್ನೇಹಿತರ ಆಕ್ರಂದನ ಮುಗಿಲು ಮುಟ್ಟಿದ್ದು, ನರಗುಂದದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.
ವಿಷಯ ತಿಳಿದು ಕುಕನೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕುಕನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

