ಬೆಂಗಳೂರು: ನಗರದಲ್ಲಿ ಕಸ ಸಂಗ್ರಹಣೆ ಮತ್ತು ವಿಲೇವಾರಿ ಸಮಸ್ಯೆಗೆ ತಂತ್ರಜ್ಞಾನದ ಮೂಲಕ ಪರಿಹಾರ ಕಂಡುಕೊಳ್ಳಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮುಂದಾಗಿದೆ.
ನಿಗದಿತ ಮಾರ್ಗದಲ್ಲಿ ಕಸದ ವಾಹನಗಳ ಸಂಚಾರ ಕಡ್ಡಾಯಗೊಳಿಸುವ ಉದ್ದೇಶದಿಂದ ‘ಮಾತ್ರ’ ಆ್ಯಪ್ ಮೂಲಕ ವಾಹನಗಳ ಚಲನವಲನದ ಮೇಲೆ ನಿಗಾ ಇಡುವ ಹೊಸ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ.
ನಗರದ ಹಲವು ಪ್ರದೇಶಗಳಲ್ಲಿ ಮನೆಗಳಿಗೆ ಕಸದ ವಾಹನಗಳು ನಿಯಮಿತವಾಗಿ ಬಾರದ ಕಾರಣ ಸಾರ್ವಜನಿಕರು ಎಲ್ಲೆಂದರಲ್ಲಿ ಕಸ ಸುರಿಯುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ಇದರಿಂದ ಬ್ಲಾಕ್ ಸ್ಪಾಟ್ಗಳ ಸಂಖ್ಯೆ ಏರಿಕೆಯಾಗಿದ್ದು, ನಗರ ಸ್ವಚ್ಛತೆ ಕಾಪಾಡುವುದು ಅಧಿಕಾರಿಗಳಿಗೆ ಸವಾಲಾಗಿದೆ.
ಈ ಸಮಸ್ಯೆಗೆ ಪರಿಹಾರವಾಗಿ ಬೆಂಗಳೂರು ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯ ಕೋರಮಂಗಲದಲ್ಲಿ ಪ್ರಾಯೋಗಿಕವಾಗಿ ‘ಮಾತ್ರ’ ಆ್ಯಪ್ ಯೋಜನೆ ಆರಂಭಿಸಲಾಗಿದೆ. ಕಸದ ವಾಹನಗಳ ಚಾಲಕರ ಮೊಬೈಲ್ಗಳಲ್ಲಿ ಈ ಆ್ಯಪ್ ಅಳವಡಿಸಲಾಗಿದ್ದು, ನಿಗದಿತ ಮಾರ್ಗದಿಂದ ವಾಹನಗಳು ಬೇರೆಡೆಗೆ ತೆರಳಿದರೆ ಅಧಿಕಾರಿಗಳಿಗೆ ತಕ್ಷಣ ಮಾಹಿತಿ ಲಭ್ಯವಾಗಲಿದೆ.
ಈ ತಂತ್ರಜ್ಞಾನ ಯಶಸ್ವಿಯಾದರೆ, ಉಳಿದ ನಾಲ್ಕು ನಗರ ಪಾಲಿಕೆಗಳಿಗೂ ಇದೇ ವ್ಯವಸ್ಥೆಯನ್ನು ವಿಸ್ತರಿಸಲು ಜಿಬಿಎ ಯೋಜನೆ ರೂಪಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಹೊಸ ವ್ಯವಸ್ಥೆಯಿಂದ ಮನೆ-ಮನೆಗೆ ಕಸ ಸಂಗ್ರಹಣೆ ಸಮರ್ಪಕವಾಗಿ ನಡೆಯುವ ನಿರೀಕ್ಷೆ ವ್ಯಕ್ತವಾಗಿದ್ದು, ನಗರದಲ್ಲಿ ಕಸ ರಾಶಿ ಹಾಗೂ ಬ್ಲಾಕ್ ಸ್ಪಾಟ್ಗಳ ಸಮಸ್ಯೆಗೆ ಕಡಿವಾಣ ಬೀಳುವ ವಿಶ್ವಾಸ ವ್ಯಕ್ತವಾಗಿದೆ.