ಬೆಂಗಳೂರು: ನಾನು ಕನ್ನಡ ನಾಡಿನ ಹುಡುಗ, ಇಲ್ಲಿ ನಾನು ತೆರಿಗೆ ಕಟ್ತಾ ಇದ್ದೇನೆ. ನಾಡಿನ ಜನರ ಪರವಾಗಿ ಸಾಮಾನ್ಯ ಪ್ರಜೆಯಾಗಿ ಪ್ರಶ್ನೆ ಮಾಡ್ತಿದ್ದೇನೆ. ಇದು ನನ್ನ ಸ್ಟೇಟಸ್ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ಗೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.
ಜೆ.ಪಿ. ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ಟೇಟಸ್ ಬಗ್ಗೆ ಟೀಕೆ ಮಾಡಿದ ಡಿಕೆಶಿಗೆ ನಾನು ಕಾಮನ್ ಮ್ಯಾನ್ ಆಗಿ ಬರ್ತೇನೆ. ನನಗೆ ಯಾವ ಸ್ಟೇಟಸ್ ಕೂಡ ಬೇಡ ಎಂದು ಟಾಂಗ್ ಕೊಟ್ಟರು.
“ಕಾಕ್ರೋಚ್ ಪಾರ್ಟಿಗೆ ಅಧ್ಯಕ್ಷರಾಗಿ”
ಸೋಶಿಯಲ್ ಮೀಡಿಯಾದಲ್ಲಿ ‘ಕಾಕ್ರೋಚ್ ಜನತಾ ಪಾರ್ಟಿ’ ಅಂತ ಸೆನ್ಸೇಷನ್ ಶುರುವಾಗಿದೆ. ಉಪಮುಖ್ಯಮಂತ್ರಿಗಳು ಅಲ್ಲಿಗೆ ಹೋಗಿ ಅಧ್ಯಕ್ಷರಾಗಲಿ” ಎಂದು ನಿಖಿಲ್ ವ್ಯಂಗ್ಯವಾಡಿದರು. ನಿನ್ನೆ ಪ್ರತಿಭಟನೆಯಲ್ಲಿ ಸಿಎಂ ಹಾಗೂ ಡಿಸಿಎಂ ಐ ಆಮ್ ಕಾಕ್ರೋಚ್ ಟೀ-ಶರ್ಟ್ ಬಿಡುಗಡೆ ಮಾಡಿದ್ದಾರೆ. ಒಂದು ರಾಷ್ಟ್ರೀಯ ಪಕ್ಷದವರಾಗಿ ಕಾಕ್ರೋಚ್ ಪಾರ್ಟಿ ಟೀ-ಶರ್ಟ್ ಬಿಡುಗಡೆ ಮಾಡಿದ್ದಾರೆ” ಎಂದು ಕಿಡಿಕಾರಿದರು.
“50% ಸ್ಥಳೀಯರಿಗೆ ಉದ್ಯೋಗ ಕಾನೂನು ತನ್ನಿ”
ಬಿಡದಿ ಕೈಗಾರಿಕಾ ಮಹಾ ಯೋಜನೆ ಭೂಸ್ವಾಧೀನವನ್ನು ತೀವ್ರವಾಗಿ ಖಂಡಿಸಿದ ನಿಖಿಲ್, ಈ ಯೋಜನೆ ಹೆಚ್.ಡಿ. ಕುಮಾರಸ್ವಾಮಿ ಅವರ ಕನಸಿನ ಕೂಸಾಗಿದ್ದರೂ, ‘ಕೃಷ್ಣಾ’ ಕಚೇರಿಯಲ್ಲಿ ರೈತರೊಂದಿಗೆ ಸಭೆ ನಡೆಸಿದ ಬಳಿಕ ಅವರ ಮನವಿಗೆ ಸ್ಪಂದಿಸಿ ಯೋಜನೆಯನ್ನು ಕೈಬಿಡಲಾಗಿತ್ತು ಎಂದು ನೆನಪಿಸಿದರು.
“ಆದರೆ ಈಗಿನ ಸರ್ಕಾರ ಇದನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದೆ. ‘ಅಲ್ಲಿ ರೈತರೇ ಇಲ್ಲ’ ಎಂದು ಡಿಸಿಎಂ ಹಠ ಹಿಡಿದಿದ್ದಾರೆ. ಕೃಷಿ ಜಮೀನನ್ನೇ ಏಕೆ ರೈತರಿಂದ ಬಲವಂತವಾಗಿ ಕಿತ್ತುಕೊಳ್ಳುತ್ತಿದ್ದೀರಿ? ಡಿಸಿಎಂ ಮೊದಲು ಹಳ್ಳಿಗಳಿಗೆ ಬಂದು ರೈತರ ಕ್ಷಮೆ ಕೇಳಲಿ” ಎಂದರು.
“ಅಷ್ಟೊಂದು ಮಾತಾಡುವ ಡಿಸಿಎಂ, ಈ ಯೋಜನೆಯಲ್ಲಿ ಸ್ಥಳೀಯರಿಗೆ ಕಡ್ಡಾಯವಾಗಿ ಶೇ. 50ರಷ್ಟು ಉದ್ಯೋಗ ನೀಡಲೇಬೇಕು ಎಂಬ ಕಾನೂನನ್ನು ತರಲಿ ನೋಡೋಣ, ಆಗ ನಾನು ಒಪ್ಪುತ್ತೇನೆ. ಕುಮಾರಸ್ವಾಮಿ ಅವರಿಗೆ ಚಾಲೆಂಜ್ ಮಾಡುವುದನ್ನು ಬಿಟ್ಟು ರೈತರ ಪ್ರಶ್ನೆಗಳಿಗೆ ಉತ್ತರಿಸಲಿ. ನಾನು ಯಾವುದೇ ಸ್ಟೇಟಸ್ ಇಲ್ಲದೆ ಕಾಮನ್ ಮ್ಯಾನ್ ಆಗಿ ಹಳ್ಳಿಗಳಿಗೆ ಬರಲು ಸಿದ್ಧ” ಎಂದು ಸವಾಲು ಹಾಕಿದರು.

