Home Blog

ಗೃಹಲಕ್ಷ್ಮಿ ಬಾಕಿ ಹಣ ಬಿಡುಗಡೆಗೆ PIL: ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ ಹೈಕೋರ್ಟ್!

ಬೆಂಗಳೂರು: ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ ಎರಡು ತಿಂಗಳ ಬಾಕಿ ಹಣ ಬಿಡುಗಡೆಗೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.

ಈ ಕುರಿತು ಬೆಂಗಳೂರಿನ ಕಮಲಾನಗರದ ನಿವಾಸಿ ಆರ್. ಗಂಗಾ ಹಾಗೂ ನಂದಿನಿ ಲೇಔಟ್‌ನ ಜಿ.ಡಿ. ಪವಿತ್ರಾ ಅವರು ಸಲ್ಲಿಸಿದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ನ್ಯಾಯಮೂರ್ತಿಗಳಾದ ಡಾ. ಕೆ. ಮನ್ಮಥ ರಾವ್ ಮತ್ತು ಸೂರಜ್ ಗೋವಿಂದರಾಜ್ ಅವರಿದ್ದ ಪೀಠವು ರಾಜ್ಯ ಹಣಕಾಸು ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ತುರ್ತು ನೋಟಿಸ್ ಜಾರಿ ಮಾಡಿದ್ದು, ಸರ್ಕಾರದ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆಯನ್ನು ಮುಂದೂಡಿದೆ.

ಅರ್ಜಿದಾರರ ಪರವಾಗಿ ಹಿರಿಯ ವಕೀಲ ವಿಕ್ರಮ್ ಹುಯಿಲಗೋಳ ವಾದ ಮಂಡಿಸಿದ್ದಾರೆ.

ವರದಿಗಳ ಪ್ರಕಾರ, 2024ರ ಏಪ್ರಿಲ್‌ನಿಂದ 2025ರ ಜನವರಿವರೆಗೆ ನಿರಂತರವಾಗಿ ಹಣ ವಿತರಣೆ ನಡೆದಿದ್ದ ಗೃಹಲಕ್ಷ್ಮಿ ಯೋಜನೆ, ನಂತರದ ತಿಂಗಳಲ್ಲಿ ತಾಂತ್ರಿಕ ಹಾಗೂ ಆಡಳಿತಾತ್ಮಕ ಬದಲಾವಣೆಗಳಿಂದ ವ್ಯತ್ಯಯಗೊಂಡಿದೆ. ಇದರ ಪರಿಣಾಮವಾಗಿ ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಕಂತುಗಳು ಫಲಾನುಭವಿಗಳಿಗೆ ಜಮೆಯಾಗದೆ ಬಾಕಿ ಉಳಿದಿವೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

 

ಭಾರೀ ಗಾಳಿ-ಮಳೆಗೆ ಬೆಂಗಳೂರು ಮೆಟ್ರೋ ಸಂಚಾರ ವಿಳಂಬ: ಪ್ರಯಾಣಿಕರಿಗೆ ತೊಂದರೆ!

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಸುರಿಯುತ್ತಿರುವ ಭಾರಿ ಗಾಳಿ ಹಾಗೂ ಗುಡುಗು ಸಹಿತ ಜಡಿಮಳೆಯಿಂದಾಗಿ ನಮ್ಮ ಮೆಟ್ರೋ ಸಂಚಾರ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ.

ಹಸಿರು ಹಾಗೂ ನೇರಳೆ ಸೇರಿದಂತೆ ಎಲ್ಲಾ ಪ್ರಮುಖ ಮೆಟ್ರೋ ಮಾರ್ಗಗಳಲ್ಲಿ ರೈಲು ಸೇವೆಗಳು ವಿಳಂಬವಾಗಿ ಕಾರ್ಯನಿರ್ವಹಿಸುತ್ತಿವೆ. ಈ ಬಗ್ಗೆ ತುರ್ತು ಪ್ರಕಟಣೆ ಹೊರಡಿಸಿರುವ ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್, ಭಾರೀ ಗಾಳಿ ಮತ್ತು ಮಳೆಯ ಪರಿಣಾಮವಾಗಿ ಮೆಟ್ರೋ ಸೇವೆಗಳ ವೇಳಾಪಟ್ಟಿಯಲ್ಲಿ ವ್ಯತ್ಯಯ ಉಂಟಾಗಿದೆ ಎಂದು ತಿಳಿಸಿದೆ.

ಪ್ರಯಾಣಿಕರ ಸುರಕ್ಷತೆಯೇ ಮೊದಲ ಆದ್ಯತೆ ಎಂದು ಸ್ಪಷ್ಟಪಡಿಸಿರುವ BMRCL, ಈ ಅನಾನುಕೂಲತೆಗೆ ವಿಷಾದ ವ್ಯಕ್ತಪಡಿಸಿದೆ. ಸುರಕ್ಷಿತ ಕಾರ್ಯಾಚರಣೆಗೆ ಆದ್ಯತೆ ನೀಡಲಾಗುತ್ತಿರುವ ಹಿನ್ನೆಲೆಯಲ್ಲಿ ರೈಲುಗಳ ಸಂಚಾರದಲ್ಲಿ ತಾತ್ಕಾಲಿಕ ವಿಳಂಬವಾಗಿದೆ. ಪರಿಸ್ಥಿತಿ ಸಹಜವಾಗುವವರೆಗೆ ಪ್ರಯಾಣಿಕರು ಸಿಬ್ಬಂದಿಗಳೊಂದಿಗೆ ಸಹಕರಿಸಬೇಕಾಗಿ ಮನವಿ ಮಾಡಲಾಗಿದೆ.

ಐಪಿಎಲ್ ನಿಯಮ ಉಲ್ಲಂಘನೆ: ಹಾರ್ದಿಕ್ ಪಾಂಡ್ಯಗೆ 1 ಡಿಮೆರಿಟ್ ಪಾಯಿಂಟ್!

ಕೋಲ್ಕತ್ತಾ: ಈಡನ್ ಗಾರ್ಡನ್ಸ್‌ನಲ್ಲಿ ನಡೆದ ಕೋಲ್ಕತ್ತಾ ನೈಟ್ ರೈಡರ್ಸ್ (KKR) ವಿರುದ್ಧದ ಐಪಿಎಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಐಪಿಎಲ್ ನೀತಿ ಸಂಹಿತೆ ಉಲ್ಲಂಘಿಸಿದ ಕಾರಣ ಬಿಸಿಸಿಐ ಅವರ ಮೇಲೆ ಶಿಸ್ತು ಕ್ರಮ ಕೈಗೊಂಡಿದೆ.

ಪಂದ್ಯದ ವೇಳೆ ಕೋಪದ ಕ್ಷಣದಲ್ಲಿ ವಿಕೆಟ್‌ನ ಬೇಲ್ಸ್‌ಗಳನ್ನು ಬಾಲ್‌ನಿಂದ ಹೊಡೆದು ಕೆಡವಿದ ಹಾರ್ದಿಕ್ ಪಾಂಡ್ಯ ಅವರ ಈ ವರ್ತನೆಯನ್ನು ನೀತಿ ಸಂಹಿತೆ ಉಲ್ಲಂಘನೆ ಎಂದು ಪರಿಗಣಿಸಲಾಗಿದೆ. ಈ ಹಿನ್ನೆಲೆಯಲ್ಲಿ ಬಿಸಿಸಿಐ, ಪಾಂಡ್ಯ ಅವರಿಗೆ ಪಂದ್ಯ ಶುಲ್ಕದ ಶೇ.10 ರಷ್ಟು ದಂಡ ವಿಧಿಸಿದ್ದು, ಜೊತೆಗೆ 1 ಡಿಮೆರಿಟ್ ಅಂಕ ನೀಡಿದೆ.

ಘಟನೆ 10ನೇ ಓವರ್‌ನ 4ನೇ ಎಸೆತದ ವೇಳೆಯಲ್ಲಿ ನಡೆದಿದ್ದು, ಫೀಲ್ಡಿಂಗ್ ವೇಳೆ ರೋವಮನ್ ಪೊವೆಲ್‌ಗೆ ಜೀವದಾನ ಸಿಕ್ಕ ಬಳಿಕ ಪಾಂಡ್ಯ ಅಸಮಾಧಾನಗೊಂಡಿದ್ದರು ಎಂದು ತಿಳಿದುಬಂದಿದೆ. ಈ ಪಂದ್ಯದಲ್ಲಿ ದೀಪಕ್ ಚಹಾರ್ ಹಾಗೂ ರಾಬಿನ್ ಮಿಂಜ್ ಬೌಂಡರಿ ಲೈನ್‌ನಲ್ಲಿ ಕ್ಯಾಚ್ ಕೈಚೆಲ್ಲಿದ ಬಳಿಕ ಪೊವೆಲ್ ಮತ್ತೊಮ್ಮೆ ಅವಕಾಶ ಪಡೆದುಕೊಂಡಿದ್ದರು.

ಪೊವೆಲ್ ಅಂತಿಮವಾಗಿ 30 ಎಸೆತಗಳಲ್ಲಿ 40 ರನ್ ಗಳಿಸಿದರೆ, ಮನೀಷ್ ಪಾಂಡೆ 33 ಎಸೆತಗಳಲ್ಲಿ 45 ರನ್ ಬಾರಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು. ಇವರಿಬ್ಬರ ಬ್ಯಾಟಿಂಗ್ ನೆರವಿನಿಂದ ಕೆಕೆಆರ್ ತಂಡವು 148 ರನ್ ಗುರಿಯನ್ನು 18.5 ಓವರ್‌ಗಳಲ್ಲಿ ತಲುಪಿ 4 ವಿಕೆಟ್ ಜಯ ದಾಖಲಿಸಿತು.

ಮುಂಬೈ ಇಂಡಿಯನ್ಸ್ ಸೋಲಿನೊಂದಿಗೆ ಅಂತ್ಯಗೊಂಡ ಈ ಪಂದ್ಯದಲ್ಲಿ ಪಾಂಡ್ಯ ಅವರ ವರ್ತನೆ ಚರ್ಚೆಗೆ ಕಾರಣವಾಗಿದ್ದು, ಐಪಿಎಲ್ ನಿಯಮಗಳ ಕಟ್ಟುನಿಟ್ಟಿನ ಅನುಷ್ಠಾನ ಮತ್ತೊಮ್ಮೆ ಸ್ಪಷ್ಟವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಿಮ್ಮಲ್ಲಿ ಈ ಗುಣಗಳಿದೆಯಾ? ಹಾಗಿದ್ರೆ ಜನ ನಿಮ್ಮನ್ನು ಸುಲಭವಾಗಿ ಕಂಟ್ರೋಲ್ ಮಾಡ್ತಾರೆ!

ವ್ಯಕ್ತಿಯ ಕೆಲವೊಂದು ದೌರ್ಬಲ್ಯಗಳು ಮತ್ತು ಅಭ್ಯಾಸಗಳೇ ಇತರರಿಗೆ ನಮ್ಮ ಮೇಲೆ ಪ್ರಾಬಲ್ಯ ಸಾಧಿಸಲು ಅವಕಾಶ ಮಾಡಿಕೊಡುತ್ತವೆ ಎಂದು ಆಚಾರ್ಯ ಚಾಣಕ್ಯರು ತಮ್ಮ ನೀತಿಶಾಸ್ತ್ರದಲ್ಲಿ ಎಚ್ಚರಿಸಿದ್ದಾರೆ.

ಆತ್ಮವಿಶ್ವಾಸದ ಕೊರತೆ, ಭಯ, ಎಲ್ಲರನ್ನೂ ಮೆಚ್ಚಿಸುವ ಸ್ವಭಾವ ಮತ್ತು ತಪ್ಪು ಸಹವಾಸ ಇವುಗಳು ವ್ಯಕ್ತಿಯನ್ನು ಮಾನಸಿಕವಾಗಿ ದುರ್ಬಲಗೊಳಿಸಿ, ಇತರರ ನಿಯಂತ್ರಣಕ್ಕೆ ಒಳಪಡಿಸುವ ಪ್ರಮುಖ ಕಾರಣಗಳಾಗಿವೆ ಎಂದು ಅವರು ಹೇಳಿದ್ದಾರೆ.

ಆಚಾರ್ಯ ಚಾಣಕ್ಯರ ಪ್ರಕಾರ, ಆತ್ಮವಿಶ್ವಾಸದ ಕೊರತೆಯಿರುವ ವ್ಯಕ್ತಿಗಳು ತಮ್ಮದೇ ಆದ ನಿರ್ಧಾರಗಳನ್ನು ತೆಗೆದುಕೊಳ್ಳಲು ಹಿಂಜರಿಯುತ್ತಾರೆ. ಸಣ್ಣ ವಿಚಾರದಿಂದ ದೊಡ್ಡ ನಿರ್ಧಾರಗಳವರೆಗೆ ಇತರರ ಸಲಹೆ ಮತ್ತು ಬೆಂಬಲವನ್ನು ಅವಲಂಬಿಸುವುದರಿಂದ, ಕ್ರಮೇಣ ಇತರರು ಅವರ ದೌರ್ಬಲ್ಯವನ್ನು ಬಳಸಿಕೊಳ್ಳಲು ಆರಂಭಿಸುತ್ತಾರೆ. ಇದರಿಂದ ವ್ಯಕ್ತಿಯ ಸ್ವತಂತ್ರ ಚಿಂತನೆ ಮತ್ತು ನಿರ್ಧಾರ ಸಾಮರ್ಥ್ಯ ಕುಗ್ಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಇನ್ನೂ ಕೆಲವರು ಎಲ್ಲರನ್ನೂ ಸಂತೋಷಪಡಿಸುವ ಉದ್ದೇಶದಿಂದ ಬದುಕುತ್ತಾರೆ. ಯಾರಿಗೂ ‘ಇಲ್ಲ’ ಎಂದು ಹೇಳದೆ, ಇತರರ ಅಭಿಪ್ರಾಯ ಮತ್ತು ಅಗತ್ಯಗಳಿಗೆ ಮಾತ್ರ ಮಹತ್ವ ನೀಡುತ್ತಾರೆ. ಈ ಸ್ವಭಾವದಿಂದ ವ್ಯಕ್ತಿ ತನ್ನ ಸ್ವಂತ ಆಸೆ, ಗುರಿ ಮತ್ತು ಸಂತೋಷವನ್ನು ಕಡೆಗಣಿಸಲು ಆರಂಭಿಸುತ್ತಾನೆ. ಇಂತಹವರನ್ನು ಇತರರು ಸುಲಭವಾಗಿ ತಮ್ಮ ಅನುಕೂಲಕ್ಕೆ ತಕ್ಕಂತೆ ಬಳಸಿಕೊಳ್ಳುತ್ತಾರೆ ಎಂದು ಚಾಣಕ್ಯರು ಹೇಳಿದ್ದಾರೆ.

ಭಯ ಮತ್ತು ಅಭದ್ರತೆಯ ಭಾವನೆಗಳು ಕೂಡ ವ್ಯಕ್ತಿಯನ್ನು ಇತರರ ನಿಯಂತ್ರಣಕ್ಕೆ ತಳ್ಳುತ್ತವೆ. ವೈಫಲ್ಯದ ಭಯ, ಒಂಟಿತನ ಅಥವಾ ಪ್ರೀತಿಪಾತ್ರರನ್ನು ಕಳೆದುಕೊಳ್ಳುವ ಆತಂಕದಿಂದ ಕೆಲವರು ಇತರರು ಹೇಳಿದಂತೆ ನಡೆಯಲು ಆರಂಭಿಸುತ್ತಾರೆ. ಹೀಗೆ ನಿರಂತರ ಭಯದಲ್ಲಿರುವ ವ್ಯಕ್ತಿಗಳು ತಮ್ಮ ಹಕ್ಕುಗಳ ಪರ ಧ್ವನಿ ಎತ್ತಲು ಸಾಧ್ಯವಾಗುವುದಿಲ್ಲ ಎಂದು ಚಾಣಕ್ಯರು ಅಭಿಪ್ರಾಯಪಟ್ಟಿದ್ದಾರೆ.

ತಪ್ಪು ಸಹವಾಸವೂ ವ್ಯಕ್ತಿತ್ವದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ ಎಂದು ಅವರು ಎಚ್ಚರಿಸಿದ್ದಾರೆ. ಕುತಂತ್ರಿ ಹಾಗೂ ಸ್ವಾರ್ಥಪರ ವ್ಯಕ್ತಿಗಳು ಮಾನಸಿಕವಾಗಿ ದುರ್ಬಲರಾಗಿರುವವರನ್ನು ತಮ್ಮ ಲಾಭಕ್ಕಾಗಿ ಬಳಸಿಕೊಳ್ಳುವ ಸಾಧ್ಯತೆ ಹೆಚ್ಚು ಎಂದು ಹೇಳಿದ್ದಾರೆ.

ತಮ್ಮ ಕನಸುಗಳು, ಆಸೆಗಳು ಮತ್ತು ಸ್ವಾಭಿಮಾನಕ್ಕಿಂತ ಇತರರ ಅಭಿಪ್ರಾಯಕ್ಕೆ ಹೆಚ್ಚು ಮಹತ್ವ ನೀಡುವವರು ಕ್ರಮೇಣ ತಮ್ಮದೇ ಗುರುತನ್ನು ಕಳೆದುಕೊಳ್ಳುತ್ತಾರೆ. ಪ್ರತಿಯೊಬ್ಬರೂ ತಮ್ಮ ಸಾಮರ್ಥ್ಯಗಳ ಮೇಲೆ ನಂಬಿಕೆ ಇಟ್ಟು, ಸ್ವತಂತ್ರ ನಿರ್ಧಾರಗಳನ್ನು ತೆಗೆದುಕೊಳ್ಳುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಆಚಾರ್ಯ ಚಾಣಕ್ಯರು ಸಲಹೆ ನೀಡಿದ್ದಾರೆ.

ವಿಜಯಪುರದಲ್ಲಿ ನೀರಿನ ತುರ್ತು ಪರಿಸ್ಥಿತಿ ಭೀತಿ: ಆಲಮಟ್ಟಿಯಲ್ಲಿ 9 ಟಿಎಂಸಿ ನೀರು ಮಾತ್ರ

ವಿಜಯಪುರ: ಕೃಷ್ಣಾ ನದಿಯ ಮೇಲೆ ಅವಲಂಬಿತವಾಗಿರುವ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಗಂಭೀರ ಸಂಕಷ್ಟ ಎದುರಾಗುವ ಭೀತಿ ಹೆಚ್ಚಾಗಿದೆ. ಆಲಮಟ್ಟಿ ಜಲಾಶಯದಲ್ಲಿ ಸದ್ಯ ಕೇವಲ 9 ಟಿಎಂಸಿ ಬಳಕೆಯ ನೀರು ಮಾತ್ರ ಉಳಿದಿದ್ದು, ಮುಂದಿನ ಮಳೆಗಾಲ ಆರಂಭವಾಗುವವರೆಗೂ ಇದೇ ನೀರಿನ ಮೇಲೆ ಲಕ್ಷಾಂತರ ಜನರು ಮತ್ತು ಜಾನುವಾರುಗಳು ಬದುಕು ಸಾಗಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ವಿಜಯಪುರ ಜಿಲ್ಲೆಯಲ್ಲಿ ಈಗಾಗಲೇ ನೀರಿನ ಪೂರೈಕೆ ಅಸ್ತವ್ಯಸ್ತಗೊಂಡಿದೆ. ಕೆಲವು ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ವಾರಕ್ಕೊಮ್ಮೆ ಮಾತ್ರ ನೀರು ಬಿಡಲಾಗುತ್ತಿದ್ದು, ಹಲವೆಡೆ 15 ದಿನಗಳಿಗೊಮ್ಮೆ ನೀರು ಪೂರೈಕೆ ನಡೆಯುತ್ತಿದೆ. ಬೇಸಿಗೆ ತೀವ್ರಗೊಂಡಿರುವ ಹಿನ್ನೆಲೆ ಜಲಾಶಯಗಳಲ್ಲಿ ಬಾಷ್ಪೀಕರಣ ಪ್ರಮಾಣವೂ ಹೆಚ್ಚಿದ್ದು, ಲಭ್ಯವಿರುವ ನೀರಿನ ಪ್ರಮಾಣ ವೇಗವಾಗಿ ಕುಸಿಯುತ್ತಿದೆ.

ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಜೂನ್ ಮಧ್ಯಭಾಗದ ಬಳಿಕವೇ ಸಮರ್ಪಕ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಮುಂದಿನ ಒಂದು ತಿಂಗಳು ನೀರಿನ ನಿರ್ವಹಣೆ ಸರ್ಕಾರ ಮತ್ತು ಸ್ಥಳೀಯ ಆಡಳಿತಕ್ಕೆ ದೊಡ್ಡ ಸವಾಲಾಗಿದೆ. ಕೃಷ್ಣಾ ನದಿಗೆ ಪೂರಕವಾಗಿದ್ದ ಭೀಮಾ ನದಿಯೂ ಸಂಪೂರ್ಣ ಖಾಲಿಯಾಗಿರುವುದು ಪರಿಸ್ಥಿತಿಯನ್ನು ಮತ್ತಷ್ಟು ಗಂಭೀರಗೊಳಿಸಿದೆ.

ಒಂದು ವೇಳೆ ಜೂನ್ ತಿಂಗಳಲ್ಲೂ ಮಳೆ ಕೈಕೊಟ್ಟರೆ, ವಿಜಯಪುರ-ಬಾಗಲಕೋಟೆ ಜಿಲ್ಲೆಗಳಲ್ಲಿ ಕುಡಿಯುವ ನೀರಿಗಾಗಿ ಸಂಘರ್ಷದ ಪರಿಸ್ಥಿತಿ ನಿರ್ಮಾಣವಾಗುವ ಸಾಧ್ಯತೆ ಇದೆ ಎಂಬ ಆತಂಕ ಸಾರ್ವಜನಿಕರಲ್ಲಿ ಹೆಚ್ಚಾಗಿದೆ.

ಪುಲ್ವಾಮಾ ದಾಳಿಯ ಮಾಸ್ಟರ್ ಮೈಂಡ್ ಹಮ್ಜಾ ಬುರ್ಹಾನ್ ಹತ್ಯೆ: ಪಿಒಕೆ ಕಚೇರಿಯೊಳಗೆ ನುಗ್ಗಿ ಗುಂಡಿನ ದಾಳಿ

ಇಸ್ಲಾಮಾಬಾದ್/ನವದೆಹಲಿ: 2019ರ ಪುಲ್ವಾಮಾ ಉಗ್ರ ದಾಳಿಯ ಪ್ರಮುಖ ಸಂಚುಕೋರ ಹಾಗೂ ಅಲ್-ಬದರ್ ಉಗ್ರ ಸಂಘಟನೆಯ ಕಮಾಂಡರ್ ಹಮ್ಜಾ ಬುರ್ಹಾನ್ ಅಲಿಯಾಸ್ ‘ಡಾಕ್ಟರ್’ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಗುಂಡಿನ ದಾಳಿಗೆ ಬಲಿಯಾಗಿದ್ದಾನೆ. ಮುಜಾಫರಾಬಾದ್‌ನಲ್ಲಿದ್ದ ಆತನ ಕಚೇರಿಯೊಳಗೆ ನುಗ್ಗಿದ ಅಪರಿಚಿತ ದುಷ್ಕರ್ಮಿಗಳು ಹಮ್ಜಾ ಮೇಲೆ ಏಕಾಏಕಿ ಗುಂಡಿನ ಮಳೆಗರೆದಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಆತ ಬಳಿಕ ಮೃತಪಟ್ಟಿದ್ದಾನೆ ಎಂದು ವರದಿಯಾಗಿದೆ.

ಹಮ್ಜಾ ಬುರ್ಹಾನ್‌ನ ನಿಜವಾದ ಹೆಸರು ಅರ್ಜುಮಂಡ್ ಗುಲ್ಜಾರ್ ದಾರ್. ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ರತ್ನಿಪೋರಾ ಮೂಲದ ಈತ, ಹಲವು ವರ್ಷಗಳ ಹಿಂದೆ ಗಡಿ ದಾಟಿ ಪಾಕಿಸ್ತಾನ ಸೇರಿಕೊಂಡಿದ್ದನು. ಬಳಿಕ ಪಾಕಿಸ್ತಾನ ಬೆಂಬಲಿತ ಅಲ್-ಬದರ್ ಉಗ್ರ ಸಂಘಟನೆಯಲ್ಲಿ ಪ್ರಮುಖ ಕಮಾಂಡರ್ ಆಗಿ ಬೆಳೆದಿದ್ದ.

2019ರ ಫೆಬ್ರವರಿ 14ರಂದು ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಆರ್‌ಪಿಎಫ್ ಯೋಧರ ವಾಹನದ ಮೇಲೆ ನಡೆದ ಆತ್ಮಾಹುತಿ ದಾಳಿಯಲ್ಲಿ 40ಕ್ಕೂ ಹೆಚ್ಚು ಯೋಧರು ಹುತಾತ್ಮರಾಗಿದ್ದರು. ಈ ದಾಳಿಯ ಹಿಂದೆ ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆಯ ಕೈವಾಡವಿದೆ ಎಂದು ಭಾರತ ಆರೋಪಿಸಿತ್ತು. ಹಮ್ಜಾ ಬುರ್ಹಾನ್ ದಾಳಿಯ ಪ್ರಮುಖ ಓವರ್ ಗ್ರೌಂಡ್ ವರ್ಕರ್ ಆಗಿ ಕಾರ್ಯನಿರ್ವಹಿಸಿದ್ದ ಎಂದು ತನಿಖೆಯಲ್ಲಿ ಬೆಳಕಿಗೆ ಬಂದಿತ್ತು.

ದಕ್ಷಿಣ ಕಾಶ್ಮೀರದಲ್ಲಿ ಯುವಕರನ್ನು ಉಗ್ರ ಸಂಘಟನೆಗಳಿಗೆ ಸೇರ್ಪಡೆ ಮಾಡುವುದು, ಹಣಕಾಸು ನೆರವು ಒದಗಿಸುವುದು ಹಾಗೂ ಉಗ್ರ ಚಟುವಟಿಕೆಗಳಿಗೆ ಲಾಜಿಸ್ಟಿಕ್ ಬೆಂಬಲ ನೀಡುವುದು ಹಮ್ಜಾ ಪ್ರಮುಖ ಕೆಲಸವಾಗಿತ್ತು. ಈ ಹಿನ್ನೆಲೆ ಭಾರತ ಸರ್ಕಾರದ ಗೃಹ ಸಚಿವಾಲಯವು 2022ರಲ್ಲಿ ಯುಎಪಿಎ ಕಾಯ್ದೆಯಡಿ ಆತನನ್ನು ಅಧಿಕೃತವಾಗಿ ಭಯೋತ್ಪಾದಕ ಎಂದು ಘೋಷಿಸಿತ್ತು.

ಪುಲ್ವಾಮಾ ದಾಳಿಯ ಬಳಿಕ ಭಾರತೀಯ ವಾಯುಪಡೆ ಪಾಕಿಸ್ತಾನದ ಬಾಲಾಕೋಟ್ ಉಗ್ರ ಶಿಬಿರಗಳ ಮೇಲೆ ವೈಮಾನಿಕ ದಾಳಿ ನಡೆಸಿತ್ತು. ಇದೀಗ ಪಾಕಿಸ್ತಾನ ಮತ್ತು ಪಿಒಕೆ ಪ್ರದೇಶಗಳಲ್ಲಿ ಭಾರತದ ಮೋಸ್ಟ್ ವಾಂಟೆಡ್ ಉಗ್ರರ ಮೇಲೆ ನಡೆಯುತ್ತಿರುವ ಸರಣಿ ಟಾರ್ಗೆಟ್ ಕಿಲ್ಲಿಂಗ್‌ಗಳಲ್ಲಿ ಹಮ್ಜಾ ಬುರ್ಹಾನ್ ಹತ್ಯೆಯೂ ಪ್ರಮುಖ ಘಟನೆಯಾಗಿ ಗುರುತಿಸಲಾಗಿದೆ.

‘ನನ್ನ ಜೀವನಕ್ಕೆ ಸೋಶಿಯಲ್ ಮೀಡಿಯಾ ತೀರ್ಪು ಬೇಕಿಲ್ಲ’: ಟ್ರೋಲರ್ಸ್ ವಿರುದ್ಧ ಅದ್ನಾನ್ ಸಮಿ ಕಿಡಿ

ಮುಂಬೈ: ಆರ್‌ಎಸ್‌ಎಸ್ ಸರಸಂಘಚಾಲಕ ಮೋಹನ್ ಭಾಗವತ್ ಅವರನ್ನು ಭೇಟಿಯಾದ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಟಾರ್ಗೆಟ್ ಆಗಿದ್ದ ಗಾಯಕ ಅದ್ನಾನ್ ಸಮಿ, ಟ್ರೋಲರ್ಸ್ ವಿರುದ್ಧ ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ತಮ್ಮ ಬದುಕಿನ ಬಗ್ಗೆ ನಿರ್ಧಾರ ಮಾಡುವ ಹಕ್ಕು ಯಾರಿಗೂ ಇಲ್ಲ ಎಂದು ಅವರು ಸ್ಪಷ್ಟವಾಗಿ ಹೇಳಿದ್ದಾರೆ.

ಸಂದರ್ಶನವೊಂದರಲ್ಲಿ ಮಾತನಾಡಿದ ಅದ್ನಾನ್ ಸಮಿ, ‘ನಾನು ನನ್ನ ಮನಸ್ಸಿಗೆ ಸರಿಯೆನಿಸುವುದನ್ನೇ ಮಾಡುತ್ತೇನೆ. ಸೋಶಿಯಲ್ ಮೀಡಿಯಾ ಜನರು ಏನು ಹೇಳುತ್ತಾರೆ ಎಂಬುದರ ಆಧಾರದ ಮೇಲೆ ನಾನು ಬದುಕುವುದಿಲ್ಲ. ನನ್ನ ಬಗ್ಗೆ ತೀರ್ಪು ಕೊಡುವ ಅಧಿಕಾರ ದೇವರಿಗೆ ಮಾತ್ರ ಇದೆ’ ಎಂದು ಹೇಳಿದ್ದಾರೆ.

‘ಇಂದಿನ ಸೋಶಿಯಲ್ ಮೀಡಿಯಾ ಸಂಸ್ಕೃತಿ ಜನರನ್ನು ಹಿನ್ನೆಲೆ ತಿಳಿಯದೇ ತೀರ್ಪು ಕೊಡಲು ಪ್ರೇರೇಪಿಸುತ್ತದೆ. ಒಂದು ಫೋಟೋ ನೋಡಿ ವ್ಯಕ್ತಿಯ ಸಂಪೂರ್ಣ ವ್ಯಕ್ತಿತ್ವವನ್ನು ಅಳೆಯಲು ಸಾಧ್ಯವೇ ಇಲ್ಲ. ನನ್ನನ್ನು ಟೀಕಿಸುವವರಲ್ಲಿ ಹೆಚ್ಚಿನವರು ನನ್ನ ಕೆಲಸವನ್ನೇ ಸರಿಯಾಗಿ ತಿಳಿದಿಲ್ಲ’ ಎಂದು ಅವರು ಹೇಳಿದ್ದಾರೆ.

ಮೋಹನ್ ಭಾಗವತ್ ಅವರನ್ನು ಭೇಟಿಯಾದ ಸಂದರ್ಭವನ್ನು ನೆನಪಿಸಿಕೊಂಡ ಅದ್ನಾನ್ ಸಮಿ, ‘ಅವರೊಂದಿಗೆ ನಡೆದ ಮಾತುಕತೆ ಬಹಳ ಉತ್ತಮ ಅನುಭವವಾಗಿತ್ತು. ಆರ್‌ಎಸ್‌ಎಸ್ ಬಗ್ಗೆ ಜನರಲ್ಲಿ ಇರುವ ಹಲವು ತಪ್ಪು ಕಲ್ಪನೆಗಳನ್ನು ಅವರು ಬಹಳ ಸರಳವಾಗಿ ವಿವರಿಸಿದರು’ ಎಂದಿದ್ದಾರೆ.

ಕಳೆದ ಫೆಬ್ರವರಿಯಲ್ಲಿ ಹಂಚಿಕೊಂಡಿದ್ದ ಫೋಟೋಗಳಲ್ಲಿ ಮೋಹನ್ ಭಾಗವತ್ ಅವರನ್ನು ‘ಸುಸಂಸ್ಕೃತ ಮತ್ತು ಉದಾತ್ತ ವ್ಯಕ್ತಿ’ ಎಂದು ಹೊಗಳಿದ್ದ ಅದ್ನಾನ್ ಸಮಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಟೀಕೆ ವ್ಯಕ್ತವಾಗಿತ್ತು. ಆದರೆ ಈಗ ಅದಕ್ಕೆ ನೇರ ಉತ್ತರ ನೀಡಿರುವ ಅವರು, ‘ನಾನು ಯಾರನ್ನೂ ಇತರರ ಅಭಿಪ್ರಾಯ ಆಧರಿಸಿ ನಿರ್ಣಯಿಸುವುದಿಲ್ಲ’ ಎಂದು ಖಡಕ್ ಸಂದೇಶ ರವಾನಿಸಿದ್ದಾರೆ.

ಪ್ರಧಾನಿ ಮೋದಿಯವರು ನೀಟ್ ವಿದ್ಯಾರ್ಥಿಗಳಿಗೆ ಬೇಷರತ್ ಕ್ಷಮೆ ಕೋರಬೇಕು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ವೈದ್ಯಕೀಯ ಕಾಲೇಜುಗಳಿಗೆ ಪರೀಕ್ಷೆ ನಡೆಸುವ ಸಿ ಇ ಟಿ ವ್ಯವಸ್ಥೆಯನ್ನು ನಡೆಸಲು ರಾಜ್ಯಗಳಿಗೇ ಅವಕಾಶ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದರು. ಅವರು ಇಂದು ಫ್ರೀಡಂ ಪಾರ್ಕ್ ನಲ್ಲಿ ಯುವ ಕಾಂಗ್ರೆಸ್ ಆಯೋಜಿಸಿದ್ದ ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧದ ಪ್ರತಿಭಟನೆಯಲ್ಲಿ ಮಾತನಾಡಿದರು.

ನೀಟ್ ಪರೀಕ್ಷೆಯ ಪ್ರಶ್ನೆ ಸೋರಿಕೆಯಾಗಿದ್ದು, ಇದಕ್ಕೆ ಜವಾಬ್ದಾರರಾಗಿರುವ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರಾಗಲಿ ಅಥವಾ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಾಗಲಿ ಜವಾಬ್ದಾರಿಯನ್ನು ಹೊತ್ತುಕೊಂಡಿಲ್ಲ. ಧರ್ಮೇಂದ್ರ ಪ್ರಧಾನ್ ಅವರು ನೀಟ್ ಪರೀಕ್ಷೆಗೆ ಮತ್ತೊಂದು ದಿನಾಂಕ ನಿಗದಿ ಮಾಡಿ ಕೈ ತೊಳೆದುಕೊಂಡಿದ್ದು , ಈ ಜವಾಬ್ದಾರಿಯನ್ನು ಧರ್ಮೇಂದ್ರ ಪ್ರಧಾನ್ ಹಾಗೂ ಪ್ರಧಾನಿ ನರೇಂದ್ರ ಮೋದಿಯವರು ಹೊರಬೇಕು ಎಂದರು.

ಸಿಇ ಟಿ ಪರೀಕ್ಷೆ ಪಾರದರ್ಶಕವಾಗಿತ್ತು

ಕರ್ನಾಟಕ ಮತ್ತಿತರೆ ರಾಜ್ಯಗಳಲ್ಲಿ ವೈದ್ಯಕೀಯ ಶಿಕ್ಷಣಕ್ಕೆ ಪ್ರವೇಶ ಬಯಸುವವರಿಗೆ ಸಿಇ ಟಿ ಪರೀಕ್ಷೆ ಪಾರದರ್ಶಕವಾಗಿ ನಡೆಯುತ್ತಿತ್ತು. ನರೇಂದ್ರ ಮೋದಿಯವರು 2014 ರಲ್ಲಿ ಪ್ರಧಾನಿಗಳಾದ ನಂತರ ಹಿಂದೆ ಇದ್ದ ಪದ್ಧತಿಯನ್ನು ಬದಲಾಯಿಸಿ 2016 ರಲ್ಲಿ ನೀಟ್ ಪರೀಕ್ಷೆಯನ್ನು ಜಾರಿಗೆ ತಂದರು. ಹತ್ತು ವರ್ಷಗಳಲ್ಲಿ ಐದು ಬಾರಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ.

ನೀಟ್ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳು ಒಂದು ವರ್ಷದಿಂದ ತಯಾರಿ ಮಾಡಿಕೊಂಡಿರುತ್ತಾರೆ. ಅನೇಕರು ಕೋಚಿಂಗ್ ಸೆಂಟರ್ ಗಳಲ್ಲಿ ತರಬೇತಿ ಪಡೆಯಲು ಸಾವಿರಾರು ರೂ ವೆಚ್ಚ ಮಾಡಿರುತ್ತಾರೆ. ಹಣವಿದ್ದವರು ಕೋಚಿಂಗ್ ಪಡೆಯುತ್ತಾರೆ, ಹಣ ಇಲ್ಲದ ಬಡವರು, ಗ್ರಾಮೀಣ ಪ್ರದೇಶದ ಮಕ್ಕಳು ಕೋಚಿಂಗ್ ಪಡೆಯಲಾಗುವುದಿಲ್ಲ ಎಂದರು.

ಮೋದಿ ಸರ್ಕಾರದಲ್ಲಿ ಬೇಧ ಭಾವ

ಮೋದಿ ಸರ್ಕಾರ ಬಂದ ನಂತರ ಬೇಧಭಾವ ಉಂಟು ಮಾಡುತ್ತಿದ್ದಾರೆ. ಬಡವರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರ ಮಕ್ಕಳ ಬಗ್ಗೆ ಅಲಕ್ಷ್ಯ ಮಾಡುತ್ತಿದ್ದಾರೆ ಎನ್ನಲು ಇದು ಸಾಕ್ಷಿ ಎಂದರು.

ವೈದ್ಯಕೀಯ ಪ್ರವೇಶ ಪರೀಕ್ಷೆ ಕೇಂದ್ರೀಕೃತವಾಗಬಾರದು

ಶಿಕ್ಷಣ ಸಮವರ್ತಿ ಪಟ್ಟಿಯಲ್ಲಿರುವ ವಿಷಯ. ಒಕ್ಕೂಟದ ವ್ಯವಸ್ಥೆಯಲ್ಲಿ ಆಯಾ ರಾಜ್ಯಗಳಿಗೆ ಸ್ವಾತಂತ್ರ್ಯ ನೀಡಬೇಕು. ಅದು ಬಿಟ್ಟು ಕೇಂದ್ರೀಕರಿಸುವ ಕೆಲಸ ಮಾಡಬಾರದು ಎಂದರು.

ಕೇಂದ್ರ ಹಾಗೂ ರಾಜ್ಯ ಬಿಜೆಪಿ ಅವಧಿಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಗಳು ಮರುಕಳಿಸಿವೆ

ಕಳೆದ ಬಿಜೆಪಿ ಸರ್ಕಾರದ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿಯವರ ಅವಧಿಯಲ್ಲಿ ಇಂಜಿನಿಯರ್, ಸಬ್ ಇನ್ಸ್ಪೆಕ್ಟರ್ ನೇಮಕಾತಿ ಯ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿತ್ತು. ಈ ಸಂಬಂಧ ಎಡಿಜಿಪಿಯಾಗಿದ್ದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಜೈಲಿಗೆ ಹೋಗಿರುವುದು ಕರ್ನಾಟಕದ ಇತಿಹಾಸದಲ್ಲಿ ಎಂದಿಗೂ ನಡೆದಿರಲಿಲ್ಲ.

ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ ಇಂತಹ ಪ್ರಶ್ನೆ ಪತ್ರಿಕೆ ಸೋರಿಕೆಗಳು ಬಹಳಷ್ಟು ನಡೆದಿವೆ. ಇದರ ಹೊಣೆಗಾರಿಕೆಯನ್ನು ಪ್ರಧಾನಿ ಮೋದಿಯವರು ಹೊರಬೇಕಿದೆ. ಆದರೆ ಅವರು ಪ್ರಸ್ತುತ ಇಟಲಿ ದೇಶಕ್ಕೆ ವಿದೇಶ ಪ್ರವಾಸದಲ್ಲಿದ್ದಾರೆ ಎಂದರು.

ಶೇ. 69 ರಷ್ಟು ಯುವಜನತೆ ನಿರುದ್ಯೋಗಿಗಳಾಗಿದ್ದಾರೆ

ದೇಶದ ಜನರಿಗೆ ಚಿನ್ನ ಖರೀದಿಸಬೇಡಿ, ಪೆಟ್ರೋಲ್ ಡೀಸೆಲ್ ಮಿತವ್ಯಯ ಮಾಡಿ, ವಿದೇಶ ಪ್ರವಾಸ ಮಾಡಬೇಡಿ ಎಂದು ಕರೆ ನೀಡಿ, ತಾವು ಮಾತ್ರ ಐದು ದೇಶಗಳ ವಿದೇಶಿ ಪ್ರವಾಸದಲ್ಲಿದ್ದಾರೆ. ದೇಶದಲ್ಲಿ 20 ರಿಂದ 29 ವಯೋಮಾನದ ಯುವಕ ಯುವತಿಯರಲ್ಲಿ ಶೇ. 67 ರಷ್ಟು ಯುವಜನತೆ ನಿರುದ್ಯೋಗಿಗಳಾಗಿದ್ದಾರೆ. ಪ್ರತಿ ವರ್ಷ 2 ಕೋಟಿ ಉದ್ಯೋಗ ಒದಗಿಸುವ ಮೂಲಕ ಕಳೆದ 12 ವರ್ಷಗಳ ಪ್ರಧಾನಿ ಮೋದಿಯವರ ಆಡಳಿತದಲ್ಲಿ 24 ಕೋಟಿ ಉದ್ಯೋಗಗಳು ಸೃಷ್ಠಿಯಾಗಬೇಕಿತ್ತು. ಆದರೆ ಈವರೆಗೆ 2 ಕೋಟಿಯಷ್ಟೂ ಉದ್ಯೋಗವನ್ನು ಕೊಡಲಾಗಲಿಲ್ಲ ಎಂದರು.

ಬಿಜೆಪಿ ಆರ್ ಎಸ್ ಎಸ್ ನವರಿಂದ ದ್ವೇಷ ಹುಟ್ಟುಹಾಕುವ ಹುನ್ನಾರ

ಸಮಾಜದಲ್ಲಿ ಹಿಂದುಮುಸ್ಲಿಂ ನಡುವೆ ದ್ವೇಷ ಹುಟ್ಟುಹಾಕುವ ವ್ಯವಸ್ಥಿತವಾದ ಹುನ್ನಾರವನ್ನು ಬಿಜೆಪಿ, ಆರ್ ಎಸ್ ಎಸ್ ಹಾಗೂ ಎಬಿವಿಪಿ ಮಾಡುತ್ತಿದೆ. ದೇಶದಲ್ಲಿ 2016 ರಿಂದ ಇಲ್ಲಿಯವರೆಗೆ 5 ಬಾರಿ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ. ಆದ್ದರಿಂದ ಕೇಂದ್ರ ಶಿಕ್ಷಣ ಸಚಿವರಾದ ಧರ್ಮೇಂದ್ರ ಪ್ರಧಾನ್ ಅವರು ಕೇವಲ ನೀಟ್ ಪರೀಕ್ಷೆಯನ್ನು ಮುಂದೂಡುವ ಜೊತೆಗೆ ,

ಪ್ರಕರಣದ ಹೊಣೆಹೊತ್ತು ರಾಜೀನಾಮೆಯನ್ನು ಹೊರಬೇಕು. ಆದರೆ ಬಿಜೆಪಿಯವರು ಭಂಡತನ ಪ್ರದರ್ಶಿಸಿ ರಾಜಿನಾಮೆ ಕೊಡಲು ಮನಸ್ಸು ಮಾಡುತ್ತಿಲ್ಲ. ಕೇಂದ್ರ ಶಿಕ್ಷಣ ಸಚಿವರು ಹೊಣೆಗಾರಿಕೆ ಹೊತ್ತು ರಾಜೀನಾಮೆ ನೀಡುವವರೆಗೂ ಇಲ್ಲಿನ ಹೋರಾಟವನ್ನು ಮುಂದುವರೆಸಬೇಕು ಎಂದರು.

ನೀಟ್ ವಿದ್ಯಾರ್ಥಿಗಳ ಆತ್ಮಹತ್ಯೆ- ಕೇಂದ್ರ ಸರ್ಕಾರ ಪರಿಹಾರ ನೀಡಿಲ್ಲ

ಸತತ ಪರಿಶ್ರಮ ನೀಡಿದ್ದ ವಿದ್ಯಾರ್ಥಿಗಳು, ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯ ಪ್ರಕರಣದಿಂದ ಹತಾಶರಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಕ್ಕೆ ಪರಿಹಾರ ನೀಡುವುದು ಕೇಂದ್ರ ಸರ್ಕಾರದ ಜವಾಬ್ದಾರಿಯಾಗಿತ್ತು.

ಅವರು ರಾಜಿನಾಮೆಯನ್ನು ಕೊಡಬೇಕೆಂದು ಒತ್ತಾಯ ಮಾಡಿದರು. ವಿದ್ಯಾರ್ಥಿಗಳ ಆತ್ಮಹತ್ಯೆಗೆ ಕಾರಣರಾದ ಪ್ರಕರಣದ ರೂವಾರಿಗಳನ್ನು ಕೊಲೆಗಾರರೆಂದು ಪರಿಗಣಿಸಿ ಶಿಕ್ಷೆ ನೀಡಬೇಕು. ಪ್ರಧಾನಿ ಮೋದಿಯವರು ತಮ್ಮ ವಿದೇಶಿ ಪ್ರವಾಸವನ್ನು ಮೊಟಕುಗೊಳಿಸಿ, ನೀಟ್ ಪರೀಕ್ಷೆ ಬರೆದ ಯುವಜನರ ಬೇಷರತ್ ಕ್ಷಮೆ ಯಾಚಿಸಬೇಕು ಎಂದರು.

ನೀಟ್ ಪರೀಕ್ಷೆ ನಡೆಸುವ ಅಧಿಕಾರ ರಾಜ್ಯಗಳಿಗೆ ನೀಡಲಿ

ಇನ್ನುಮುಂದೆ ಕೇಂದ್ರಸರ್ಕಾರ ನೀಟ್ ಪರೀಕ್ಷೆಗಳನ್ನು ನಡೆಸದೇ, ಈ ಜವಾಬ್ದಾರಿಯನ್ನು ಆಯಾ ರಾಜ್ಯಗಳಿಗೆ ಪರೀಕ್ಷೆ ನಡೆಸುವ ಅಧಿಕಾರವನ್ನು ಕೊಡಬೇಕೆನ್ನುವ ಒತ್ತಾಯ ಮಾಡುವುದಾಗಿ ತಿಳಿಸಿದರು. ಇಂದು ರಾಜೀವ್ ಗಾಂಧಿಯವರ 35 ಪುಣ್ಯತಿಥಿಯಾಗಿದ್ದು, ಅವರ ಆದರ್ಶಗಳನ್ನು ಎಲ್ಲರೂ ಪಾಲನೆ ಮಾಡಬೇಕಿದೆ ಎಂದರು.

ಎ ಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ, ಕಾರ್ಯದರ್ಶಿ ಅಭಿಷೇಕ್ ದತ್ತಾ, ರಾಷ್ಟ್ರೀಯ ಯುವ ಕಾಂಗ್ರೆಸ್ಸಿನ ಅಧ್ಯಕ್ಷ ಉದಯ ಬಾನು, ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಗೌಡ, ಸಚಿವರು, ಶಾಸಕರು, ಉಪಸ್ಥಿತರಿದ್ದರು.

ತುಮಕೂರನ್ನು ಬೆಳೆಸುವ ಉದ್ದೇಶವೇ ಹೊರತು ಇತಿಹಾಸ ಬದಲಿಸುವುದಲ್ಲ: ಬಿಜೆಪಿ ಟೀಕೆಗೆ ಪರಮೇಶ್ವರ್ ಸ್ಪಷ್ಟನೆ

ಬೆಂಗಳೂರು: ತುಮಕೂರಿನ ಇತಿಹಾಸ ಅಥವಾ ಅಸ್ತಿತ್ವವನ್ನು ಬದಲಿಸುವ ಉದ್ದೇಶ ಸರ್ಕಾರಕ್ಕಿಲ್ಲ. ಅಭಿವೃದ್ಧಿ ದೃಷ್ಟಿಯಿಂದ ಮಾತ್ರ ತುಮಕೂರನ್ನು ಬೆಂಗಳೂರು ಉತ್ತರ ಭಾಗದೊಂದಿಗೆ ಸಂಪರ್ಕಿಸುವ ಕುರಿತು ಪ್ರಸ್ತಾಪ ಮಾಡಲಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.

ನಗರದ ಸದಾಶಿವನಗರದಲ್ಲಿರುವ ತಮ್ಮ ಸರ್ಕಾರಿ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತುಮಕೂರನ್ನು ಬೆಂಗಳೂರಿಗೆ ಸೇರಿಸುವುದೇ ನಮ್ಮ ಉದ್ದೇಶವಲ್ಲ. ಈ ವಿಷಯವನ್ನು ಸರಿಯಾಗಿ ಅರ್ಥಮಾಡಿಕೊಳ್ಳಬೇಕು ಎಂದು ಹೇಳಿದರು.

ತುಮಕೂರು ಜಿಲ್ಲೆಯ ಹೆಸರನ್ನು ಬದಲಿಸುವ ಪ್ರಶ್ನೆಯೇ ಇಲ್ಲ. ತುಮಕೂರಿಗೆ ತನ್ನದೇ ಆದ ಇತಿಹಾಸ, ಅಸ್ಮಿತೆ ಮತ್ತು ಭಾವನಾತ್ಮಕ ಸಂಬಂಧವಿದೆ. ಅದನ್ನು ಬದಲಿಸಲು ಯಾರೂ ಹೋಗುವುದಿಲ್ಲ. ಬಂಡವಾಳ ಹೂಡಿಕೆ ಸೇರಿದಂತೆ ಹೆಚ್ಚಿನ ಅಭಿವೃದ್ಧಿ ಅವಕಾಶಗಳು ತುಮಕೂರಿಗೆ ಸಿಗಲಿ ಎಂಬ ಉದ್ದೇಶದಿಂದ ಮಾತ್ರ ಈ ವಿಚಾರ ಪ್ರಸ್ತಾಪವಾಗಿದೆ” ಎಂದು ತಿಳಿಸಿದರು.

ಬಿಜೆಪಿ ನಾಯಕರು ವಿಷಯವನ್ನು ತಪ್ಪಾಗಿ ಅರ್ಥೈಸಿಕೊಳ್ಳುತ್ತಿದ್ದಾರೆ ಎಂದು ಟೀಕಿಸಿದ ಪರಮೇಶ್ವರ್, “ತುಮಕೂರಿನ ಬಗ್ಗೆ ಎಲ್ಲರಿಗೂ ಇರುವ ಭಾವನೆ ನನಗೂ ಇದೆ. ನಾನು ಹುಟ್ಟಿ ಬೆಳೆದದ್ದೇ ತುಮಕೂರಿನಲ್ಲಿ. ತುಮಕೂರಿನ ಹೆಸರು, ಆಡಳಿತ ವ್ಯವಸ್ಥೆ ಅಥವಾ ಭೌಗೋಳಿಕ ವಿಸ್ತೀರ್ಣ ಯಾವುದೂ ಬದಲಾಗುವುದಿಲ್ಲ” ಎಂದು ಪುನರುಚ್ಚರಿಸಿದರು.

ಬೆಂಗಳೂರಿಗೆ ಹತ್ತಿರ ಇರುವ ಹಿನ್ನೆಲೆಯಲ್ಲಿ ಬೆಂಗಳೂರು ಉತ್ತರ ವಲಯದೊಂದಿಗೆ ಅಭಿವೃದ್ಧಿ ದೃಷ್ಟಿಯಿಂದ ಸಂಪರ್ಕಿಸಬೇಕೆಂದು ಕೇಳಲಾಗಿದೆ ಅಷ್ಟೇ ಎಂದು ಹೇಳಿದರು.

ದೆಹಲಿ ಸಮೀಪದ ನೋಯ್ಡಾ ಮಾದರಿಯನ್ನು ಉದಾಹರಣೆಯಾಗಿ ಉಲ್ಲೇಖಿಸಿದ ಅವರು, “ದೇಶದ ವಿವಿಧ ಭಾಗಗಳಲ್ಲಿ ಅಭಿವೃದ್ಧಿಯನ್ನು ವಿಕೇಂದ್ರೀಕರಿಸುವ ಉದ್ದೇಶದಿಂದ ಈ ರೀತಿಯ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ತುಮಕೂರನ್ನೂ ಅಭಿವೃದ್ಧಿಪಡಿಸಬಾರದೆಯೇ?” ಎಂದು ಪ್ರಶ್ನಿಸಿದರು.

ವನ್ಯಜೀವಿ ದಾಳಿ ಹೆಚ್ಚಳಕ್ಕೆ ಸರ್ಕಾರದ ಕಠಿಣ ಕ್ರಮ: ಓಪನ್ ಜೀಪ್ ಸಫಾರಿಗೆ ಬ್ರೇಕ್- ಪನ್ಸೋಲಿ ಆನೆ ಬಿಡಾರಕ್ಕೆ ಪ್ರವೇಶ ನಿರ್ಬಂಧ

ಬೆಂಗಳೂರು/ಕಾರವಾರ, ಮೇ 21: ರಾಜ್ಯದಲ್ಲಿ ವನ್ಯಜೀವಿ ದಾಳಿ ಪ್ರಕರಣಗಳು ಸರಣಿ ರೂಪದಲ್ಲಿ ಹೆಚ್ಚಾಗುತ್ತಿರುವ ಹಿನ್ನೆಲೆ ಅರಣ್ಯ ಇಲಾಖೆ ಹಾಗೂ ರಾಜ್ಯ ಸರ್ಕಾರ ಕಠಿಣ ನಿರ್ಧಾರ ಕೈಗೊಂಡಿದ್ದು, ಇನ್ನುಮುಂದೆ ಓಪನ್ ಜೀಪ್ ಸಫಾರಿಗೆ ಸಂಪೂರ್ಣ ನಿಷೇಧ ಹೇರಲಾಗಿದೆ. ಪ್ರವಾಸಿಗರಿಗೆ ಕೇವಲ ಬಸ್ ಸಫಾರಿಗೆ ಮಾತ್ರ ಅವಕಾಶ ನೀಡಲು ಸರ್ಕಾರ ಮುಂದಾಗಿದೆ.

ಕೊಡಗಿನ ದುಬಾರೆ ಆನೆ ಶಿಬಿರದಲ್ಲಿ ನಡೆದ ಭೀಕರ ದುರಂತ, ನಾಗಮಲೆ ಭಾಗದಲ್ಲಿ ಚಿರತೆ ದಾಳಿಗೆ 10 ವರ್ಷದ ಬಾಲಕ ಬಲಿಯಾದ ಘಟನೆ ಹಾಗೂ ಬಂಡೀಪುರ-ನಾಗರಹೊಳೆ ಅರಣ್ಯ ವ್ಯಾಪ್ತಿಯಲ್ಲಿ ನಡೆದಿದ್ದ ಹುಲಿ ದಾಳಿಗಳ ಸರಣಿ ಪ್ರಕರಣಗಳು ಸರ್ಕಾರವನ್ನು ಎಚ್ಚೆತ್ತುಕೊಳ್ಳುವಂತೆ ಮಾಡಿವೆ.

ದುಬಾರೆ ಶಿಬಿರದಲ್ಲಿ ಮೇ 18ರಂದು ಮದವೇರಿದ್ದ ಕಂಜನ್ ಆನೆ ಮಾರ್ತಾಂಡ ಆನೆ ಮೇಲೆ ದಾಳಿ ನಡೆಸಿದ ಪರಿಣಾಮ ನಿಯಂತ್ರಣ ತಪ್ಪಿದ ಮಾರ್ತಾಂಡ ಪ್ರವಾಸಿಗರ ಮೇಲೆ ಬಿದ್ದಿತ್ತು. ಘಟನೆಯಲ್ಲಿ ಚೆನ್ನೈ ಮೂಲದ ಮಹಿಳೆ ತುಳಸಿ ಸಾವನ್ನಪ್ಪಿದ್ದರೆ, ಮಾರ್ತಾಂಡ ಆನೆಯೂ ಗಂಭೀರ ಗಾಯಗಳಿಂದ ಬಳಿಕ ಮೃತಪಟ್ಟಿತ್ತು. ಈ ಘಟನೆ ರಾಜ್ಯಾದ್ಯಂತ ಭಾರೀ ಆತಂಕ ಸೃಷ್ಟಿಸಿತ್ತು.

ಇದರ ಬೆನ್ನಲ್ಲೇ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಪನ್ಸೋಲಿ ಆನೆ ಬಿಡಾರಕ್ಕೂ ಸಾರ್ವಜನಿಕರ ಪ್ರವೇಶ ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ. ರಾಜ್ಯದ ವಿವಿಧ ಆನೆ ಶಿಬಿರಗಳು ಹಾಗೂ ಸಫಾರಿ ಕೇಂದ್ರಗಳಲ್ಲಿ ಭದ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಅರಣ್ಯ ಇಲಾಖೆ ಮುಂದಾಗಿದೆ.

ಹೊಸ ಎಸ್‌ಒಪಿ ಪ್ರಕಾರ, ಈಗಾಗಲೇ ಬಳಕೆಯಲ್ಲಿರುವ ಓಪನ್ ಜೀಪ್‌ಗಳಲ್ಲಿ ಸಫಾರಿ ನಡೆಸಬೇಕಾದರೆ ಕಡ್ಡಾಯವಾಗಿ ಒಡೆಯದ ಗ್ಲಾಸ್ ಅಥವಾ ಕಬ್ಬಿಣದ ಮೆಶ್ ಅಳವಡಿಸಬೇಕು ಎಂದು ಸೂಚಿಸಲಾಗಿದೆ. ಪ್ರವಾಸಿಗರು ಮತ್ತು ವನ್ಯಜೀವಿಗಳ ನಡುವೆ ಸುರಕ್ಷಿತ ಅಂತರ ಕಾಪಾಡುವುದು, ನಿಯಂತ್ರಿತ ಪ್ರವಾಸ ವ್ಯವಸ್ಥೆ ರೂಪಿಸುವುದು ಹಾಗೂ ಅಪಾಯದ ಪ್ರದೇಶಗಳಲ್ಲಿ ಮಾನವ ಚಟುವಟಿಕೆ ಕಡಿಮೆ ಮಾಡುವುದು ಸರ್ಕಾರದ ಮುಂದಿನ ಗುರಿಯಾಗಿದೆ.

ರಾಜ್ಯದ ಎಲ್ಲಾ ವನ್ಯಜೀವಿ ಪ್ರವಾಸಿ ತಾಣಗಳಲ್ಲಿ ಹೆಚ್ಚುವರಿ ಭದ್ರತಾ ಮಾನದಂಡ ಜಾರಿಗೆ ತರಲು ಅರಣ್ಯ ಇಲಾಖೆ ಸಿದ್ಧತೆ ನಡೆಸಿದ್ದು, ಶೀಘ್ರದಲ್ಲೇ ಸಮಗ್ರ ಮಾರ್ಗಸೂಚಿ ಪ್ರಕಟವಾಗುವ ಸಾಧ್ಯತೆ ಇದೆ.

error: Content is protected !!