Home Blog

ರೀಲ್ಸ್‌ಗಾಗಿ ಧರಿಸಿದ ಉಡುಪೇ ಸಂಕಷ್ಟ ತಂದಿತೇ?: ಕಿಶನ್ ಬಿಳಗಲಿ-ನಿವೇದಿತಾ ಗೌಡ ವಿರುದ್ಧ ವನ್ಯಜೀವಿ ಕಾಯ್ದೆ ಉಲ್ಲಂಘನೆ ಆರೋಪ

ಬೆಂಗಳೂರು: ಹುಲಿ ಉಗುರು ಪ್ರಕರಣದ ಬಳಿಕ ಇದೀಗ ನವಿಲು ಗರಿ ವಿವಾದ ಕನ್ನಡ ಕಿರುತೆರೆ ಲೋಕದಲ್ಲಿ ಹೊಸ ಸಂಚಲನ ಸೃಷ್ಟಿಸಿದೆ. ಜನಪ್ರಿಯ ನಟ ಕಿಶನ್ ಬಿಳಗಲಿ ಹಾಗೂ ನಟಿ ನಿವೇದಿತಾ ಗೌಡ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆ ಉಲ್ಲಂಘನೆ ಆರೋಪ ಕೇಳಿಬಂದಿದ್ದು, ಅರಣ್ಯ ಇಲಾಖೆಗೆ ಅಧಿಕೃತ ದೂರು ಸಲ್ಲಿಕೆಯಾಗಿದೆ.

ನಟ-ನಟಿ ಜೋಡಿ ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದ ರೀಲ್ಸ್‌ನಲ್ಲಿ ನವಿಲು ಗರಿಗಳಿಂದ ಅಲಂಕರಿಸಲಾದ ಉಡುಪು ಧರಿಸಿ ಕಾಣಿಸಿಕೊಂಡಿದ್ದರು. ಈ ವಿಡಿಯೋ ವೈರಲ್ ಆದ ಬೆನ್ನಲ್ಲೇ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ದೂರು ದಾಖಲಿಸಿದ್ದಾರೆ.

ದೂರಿನಲ್ಲಿ ನೈಜ ನವಿಲು ಗರಿಗಳನ್ನು ಬಳಸಿಕೊಂಡು ಉಡುಪು ತಯಾರಿಸಿ ಸಾರ್ವಜನಿಕವಾಗಿ ಪ್ರದರ್ಶಿಸಿರುವುದು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡಿರುವುದು ವನ್ಯಜೀವಿ (ಸಂರಕ್ಷಣಾ) ಕಾಯ್ದೆಯ ಗಂಭೀರ ಉಲ್ಲಂಘನೆಯಾಗಬಹುದು ಎಂದು ಉಲ್ಲೇಖಿಸಲಾಗಿದೆ.

ಈ ಹಿನ್ನೆಲೆಯಲ್ಲಿ ವೈರಲ್ ವಿಡಿಯೋ ಮತ್ತು ಫೋಟೋಗಳ ವೈಜ್ಞಾನಿಕ ಪರಿಶೀಲನೆ ನಡೆಸಿ, ಬಳಸಿರುವ ಗರಿಗಳು ನೈಜವೋ ಅಥವಾ ಕೃತಕವೋ ಎಂಬುದನ್ನು ಪತ್ತೆಹಚ್ಚಬೇಕು ಎಂದು ಆಗ್ರಹಿಸಲಾಗಿದೆ. ನೈಜ ನವಿಲು ಗರಿಗಳಾಗಿರುವುದು ದೃಢಪಟ್ಟಲ್ಲಿ ಸಂಬಂಧಿತ ಉಡುಪುಗಳನ್ನು ವಶಕ್ಕೆ ಪಡೆದು ತನಿಖೆ ವಿಸ್ತರಿಸಬೇಕು ಎಂದು ದೂರಿನಲ್ಲಿ ತಿಳಿಸಲಾಗಿದೆ.

ಇದರ ಜೊತೆಗೆ ಗರಿಗಳ ಮೂಲ, ಖರೀದಿ, ಸಂಗ್ರಹಣೆ ಹಾಗೂ ಪೂರೈಕೆ ಸರಪಳಿಯ ಸಂಪೂರ್ಣ ತನಿಖೆ ನಡೆಸಬೇಕು. ನವಿಲು ಗರಿಗಳಿಗಾಗಿ ಅಕ್ರಮ ಬೇಟೆ, ಕಳ್ಳಸಾಗಣೆ ಅಥವಾ ಇತರೆ ವನ್ಯಜೀವಿ ಅಪರಾಧ ನಡೆದಿರುವ ಶಂಕೆ ಇದ್ದರೆ ವಿಶೇಷ ತನಿಖಾ ತಂಡ ರಚಿಸಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಗಿದೆ.

ಸದ್ಯ ದೂರು ಅರಣ್ಯ ಇಲಾಖೆಯ ಗಮನಕ್ಕೆ ಬಂದಿದ್ದು, ಪ್ರಾಥಮಿಕ ಹಂತದ ಪರಿಶೀಲನೆ ಬಳಿಕ ಮುಂದಿನ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ.

RSS ಟೀಕೆ ಬಿಟ್ಟು ರಾಜ್ಯದ ಗಂಭೀರ ಸಮಸ್ಯೆಗಳತ್ತ ಗಮನ ಕೊಡಿ: ಪ್ರಿಯಾಂಕ್ ಖರ್ಗೆ ವಿರುದ್ಧ ಸಿಟಿ ರವಿ ಕಿಡಿ

ಬೆಂಗಳೂರು: ಸಚಿವ ಪ್ರಿಯಾಂಕ್ ಖರ್ಗೆ ಅವರು ಆರ್‌ಎಸ್‌ಎಸ್‌ ಅನ್ನು ಪದೇ ಪದೇ ಟೀಕಿಸುತ್ತಿರುವ ವಿಚಾರಕ್ಕೆ ಬಿಜೆಪಿ ಮುಖಂಡ ಸಿ.ಟಿ. ರವಿ ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಿಯಾಂಕ್ ಖರ್ಗೆ ಅವರಿಗೆ ಮಾಡಲು ಸಾಕಷ್ಟು ಕೆಲಸಗಳಿದ್ದು, ಆರ್‌ಎಸ್‌ಎಸ್‌ ಕುರಿತು ಹೇಳಿಕೆ ನೀಡುವುದಕ್ಕಿಂತ ರಾಜ್ಯದ ಗಂಭೀರ ಸಮಸ್ಯೆಗಳ ಕಡೆ ಗಮನಹರಿಸಬೇಕು ಎಂದು ಹೇಳಿದರು.

ಕರ್ನಾಟಕ ಡ್ರಗ್ಸ್ ಹಾವಳಿಯಿಂದ ತತ್ತರಿಸುತ್ತಿದ್ದು, ರಾಜ್ಯ ಡ್ರಗ್ಸ್ ಕ್ಯಾಪಿಟಲ್ ಆಗುವ ಆತಂಕ ಎದುರಾಗಿದೆ. ಇದರತ್ತ ಸರ್ಕಾರ ಗಮನಹರಿಸಬೇಕು. ಅಲ್ಲದೆ, ಬಾಂಗ್ಲಾದೇಶ ಮೂಲದ ಅಕ್ರಮ ವಲಸಿಗರು ದೊಡ್ಡ ಪ್ರಮಾಣದಲ್ಲಿ ಕರ್ನಾಟಕಕ್ಕೆ ಬರುತ್ತಿರುವ ಮಾಹಿತಿ ಇದೆ. ಇದು ದೇಶದ ಭದ್ರತೆಯ ದೃಷ್ಟಿಯಿಂದ ಗಂಭೀರ ವಿಷಯವಾಗಿದ್ದು, ಸರ್ಕಾರ ಇದನ್ನು ನಿರ್ಲಕ್ಷಿಸಬಾರದು ಎಂದು ಹೇಳಿದರು.

ಭಯೋತ್ಪಾದಕರ ಸ್ಲೀಪರ್ ಸೆಲ್‌ಗಳ ಚಟುವಟಿಕೆಗಳಿಗೆ ಕರ್ನಾಟಕವನ್ನು ಬಳಸಿಕೊಳ್ಳಲಾಗುತ್ತಿದೆ ಎಂಬ ಮಾಹಿತಿ ಇರುವುದಾಗಿ ಹೇಳಿದ ಅವರು, ಈ ಸಂಬಂಧ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮಾಹಿತಿ ಸಂಗ್ರಹಿಸಿದ್ದು, ಉಗ್ರರ ಸಂಪರ್ಕ ಹೊಂದಿರುವ ಆರೋಪಿಗಳನ್ನು ಬಂಧಿಸಲಾಗಿದೆ. ಇಂತಹ ಗಂಭೀರ ವಿಷಯಗಳ ಬಗ್ಗೆ ಸರ್ಕಾರ ಹೆಚ್ಚಿನ ಗಮನಹರಿಸಬೇಕು ಎಂದು ಒತ್ತಾಯಿಸಿದರು.

ನೀಟ್ ಪರೀಕ್ಷೆಗೆ ಸಂಬಂಧಿಸಿದ ಗೊಂದಲದ ಬಗ್ಗೆಯೂ ಮಾತನಾಡಿದ ಸಿ.ಟಿ. ರವಿ, ಕೆಪಿಸಿಸಿ ಅಧ್ಯಕ್ಷರ ಅಧಿಕಾರ ಸ್ವೀಕಾರ ಸಮಾರಂಭದ ವೇಳಾಪಟ್ಟಿಯನ್ನು ಒಂದು ದಿನ ಮುಂದೂಡಿದ್ದರೆ ಅಥವಾ ಹಿಂದೂಡಿದ್ದರೆ, ಪರೀಕ್ಷೆಗೆ ಬಂದಿದ್ದ ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕುತ್ತಿರಲಿಲ್ಲ ಎಂದು ಹೇಳಿದರು.

ಪರೀಕ್ಷೆಯಿಂದ ವಂಚಿತರಾಗಿ ಕಣ್ಣೀರು ಹಾಕಿದ ವಿದ್ಯಾರ್ಥಿಗಳ ನೋವಿನ ಬಗ್ಗೆ ಸರ್ಕಾರ ಯೋಚಿಸಬೇಕು. ಇದು ಅಧಿಕಾರದ ಅಹಂಕಾರದ ಪರಿಣಾಮ. ಅಧಿಕಾರದ ಮದವನ್ನು ಬಿಟ್ಟು ಜನರ ಹಿತದೃಷ್ಟಿಯಿಂದ ಆದ್ಯತೆಗಳನ್ನು ನಿರ್ಧರಿಸಬೇಕು ಎಂದು ಟೀಕಿಸಿದರು.

ಕಾಲವೇ ಎಲ್ಲದಕ್ಕೂ ಉತ್ತರ ನೀಡುತ್ತದೆ. ಅಧಿಕಾರದ ಅಹಂಕಾರದಲ್ಲಿ ಬದುಕಿದವರು ಕೊನೆಯಲ್ಲಿ ಇತಿಹಾಸದಲ್ಲಿ ಉಳಿದಿಲ್ಲ. ಉತ್ತಮ ಕೆಲಸ ಮಾಡುವ ಅವಕಾಶ ಇದ್ದಾಗ ಅದನ್ನು ಬಿಟ್ಟು, ಉತ್ತಮ ಕೆಲಸ ಮಾಡುವವರ ವಿರುದ್ಧ ಅಪಪ್ರಚಾರ ನಡೆಸುವುದು ಸರಿಯಲ್ಲ. ಅಪಪ್ರಚಾರದಿಂದ ಪ್ರಚಾರ ಸಿಗಬಹುದು, ಆದರೆ ಅದು ಯಾವುದೇ ಘನ ಕಾರ್ಯವಲ್ಲ ಎಂದು ಪ್ರಿಯಾಂಕ್ ಖರ್ಗೆ ವಿರುದ್ಧ ಸಿ.ಟಿ. ರವಿ ವಾಗ್ದಾಳಿ ನಡೆಸಿದರು.

ಗದಗ ಎಸ್ಪಿ ರೋಹನ್ ಜಗದೀಶ್ ಸೇರಿ ನಾಲ್ವರಿಗೆ ಪ್ರತಿಷ್ಠಿತ DG-IGP ಪ್ರಶಂಸನಾ ಪದಕ; ಗದಗ ಜಿಲ್ಲೆಯ ಪೊಲೀಸ್ ಇಲಾಖೆಗೆ ಹೆಮ್ಮೆಯ ಗರಿ!

0

ಗದಗ: ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ದಕ್ಷತೆ, ಅಪರಾಧ ನಿಯಂತ್ರಣದಲ್ಲಿ ಪರಿಣಾಮಕಾರಿ ಕಾರ್ಯಾಚರಣೆ, ಜನಸ್ನೇಹಿ ಪೊಲೀಸ್ ವ್ಯವಸ್ಥೆ ಹಾಗೂ ಕರ್ತವ್ಯನಿಷ್ಠ ಸೇವೆಯ ಮೂಲಕ ಗುರುತಿಸಿಕೊಂಡಿರುವ ಗದಗ ಜಿಲ್ಲಾ ಪೊಲೀಸ್ ಇಲಾಖೆಗೆ ರಾಜ್ಯ ಮಟ್ಟದ ಪ್ರತಿಷ್ಠಿತ ಗೌರವ ಲಭಿಸಿದೆ.

ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಹಾಗೂ ಶ್ಲಾಘನೀಯ ಸೇವೆ ಸಲ್ಲಿಸಿದ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ನೀಡಲಾಗುವ “ಡಿಜಿ ಮತ್ತು ಐಜಿಪಿ ಪ್ರಶಂಸನಾ ಪದಕ-2025-26”ಕ್ಕೆ ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ಸೇರಿದಂತೆ ಜಿಲ್ಲೆಯ ಮೂವರು ಅಧಿಕಾರಿಗಳು ಮತ್ತು ಸಿಬ್ಬಂದಿ ಆಯ್ಕೆಯಾಗಿದ್ದು, ಜಿಲ್ಲೆಯ ಕೀರ್ತಿಯನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ದಿದ್ದಾರೆ.

ರಾಜ್ಯಾದ್ಯಂತ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸುತ್ತಿರುವ 200 ಅಧಿಕಾರಿ ಮತ್ತು ಸಿಬ್ಬಂದಿಯನ್ನು ಈ ಸಾಲಿನ ಪ್ರಶಂಸನಾ ಪದಕಕ್ಕೆ ಆಯ್ಕೆ ಮಾಡಲಾಗಿದೆ. ಮಹಾನಿರ್ದೇಶಕರು ಹಾಗೂ ಪೊಲೀಸ್ ಮಹಾನಿರೀಕ್ಷಕರಾದ ಡಾ. ಎಂ.ಎ. ಸಲೀಂ ಅವರ ಕಚೇರಿಯಿಂದ ಅಧಿಕೃತ ಆದೇಶ ಹೊರಬಿದ್ದಿದ್ದು, ಗದಗ ಜಿಲ್ಲೆಯ ನಾಲ್ವರು ಪೊಲೀಸ್ ಸಿಬ್ಬಂದಿಯ ಹೆಸರುಗಳು ಪಟ್ಟಿಯಲ್ಲಿ ಸ್ಥಾನ ಪಡೆದಿರುವುದು ವಿಶೇಷವಾಗಿದೆ.

ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಖಡಕ್ ನಿರ್ಧಾರ ತೆಗೆದುಕೊಳ್ಳುವ ಎಸ್ಪಿ ರೋಹನ್ ಜಗದೀಶ್ ಅವರಿಗೆ ಈ ಗೌರವ ಲಭಿಸಿರುವುದು ಗದಗ ಪೊಲೀಸ್ ಇಲಾಖೆಯ ಸಾಧನೆಗೆ ದೊರೆತ ಮಹತ್ವದ ಮನ್ನಣೆಯಾಗಿದೆ. ಅಪರಾಧ ತಡೆ, ಸಾರ್ವಜನಿಕರೊಂದಿಗೆ ಉತ್ತಮ ಬಾಂಧವ್ಯ ಹಾಗೂ ಶಿಸ್ತಿನ ಆಡಳಿತದ ಮೂಲಕ ಅವರು ಜಿಲ್ಲೆಯಲ್ಲಿ ಪರಿಣಾಮಕಾರಿ ಪೊಲೀಸ್ ವ್ಯವಸ್ಥೆ ರೂಪಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಅದೇ ರೀತಿ ಬೆಟಗೇರಿ ಬಡಾವಣೆ ಪೊಲೀಸ್ ಠಾಣೆಯ ಪಿಎಸ್‌ಐ ಮಾರುತಿ ಜೋಗದಂಡಕರ್, ಗದಗ ಗ್ರಾಮೀಣ ಪೊಲೀಸ್ ಠಾಣೆಯ ಎಎಸ್‌ಐ ವಿಶ್ವನಾಥ್ ಬಡಿಗೇರ್ ಹಾಗೂ ಡಿಎಆರ್ ಗದಗದ ಎಪಿಸಿ-57 ಮಂಜುನಾಥ್ ಬಂಡಿಹಾಳ್ ಅವರುಗಳು ತಮ್ಮ ಕರ್ತವ್ಯ ನಿರ್ವಹಣೆಯಲ್ಲಿ ತೋರಿದ ನಿಷ್ಠೆ, ಪ್ರಾಮಾಣಿಕತೆ ಹಾಗೂ ಸೇವಾ ಮನೋಭಾವಕ್ಕಾಗಿ ಈ ಪ್ರತಿಷ್ಠಿತ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಕರ್ನಾಟಕ ಪೊಲೀಸ್ ಇಲಾಖೆಯ ಅತ್ಯುನ್ನತ ಗೌರವಗಳಲ್ಲಿ ಒಂದೆನಿಸಿರುವ ಡಿಜಿ-ಐಜಿಪಿ ಪ್ರಶಂಸನಾ ಪದಕ ಗದಗ ಜಿಲ್ಲೆಯ ನಾಲ್ವರು ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಲಭಿಸಿರುವುದು ಜಿಲ್ಲೆಯ ಪೊಲೀಸ್ ಇಲಾಖೆಯ ಕಾರ್ಯಕ್ಷಮತೆಗೆ ಸಂದ ರಾಜ್ಯ ಮಟ್ಟದ ಮನ್ನಣೆಯಾಗಿದೆ. ಪದಕ ವಿಜೇತರಿಗೆ ಇಲಾಖೆಯ ಹಿರಿಯ ಅಧಿಕಾರಿಗಳು, ಸಹೋದ್ಯೋಗಿಗಳು, ವಿವಿಧ ಸಂಘ-ಸಂಸ್ಥೆಗಳ ಮುಖಂಡರು ಹಾಗೂ ಸಾರ್ವಜನಿಕರಿಂದ ಅಭಿನಂದನೆಗಳ ಮಹಾಪೂರ ಹರಿದು ಬರುತ್ತಿದೆ.

ಬಿಡದಿ ಭೂ ವ್ಯವಹಾರ ಕುರಿತು ಕುಮಾರಸ್ವಾಮಿ ಪ್ರಸ್ತಾಪ: ವರದಿ ಪರಿಶೀಲಿಸಿ ಬಳಿಕ ಅಭಿಪ್ರಾಯ ತಿಳಿಸುತ್ತೇನೆ ಎಂದ ಎಚ್.ಕೆ. ಪಾಟೀಲ್

ಬೆಂಗಳೂರು: ಬಿಡದಿ ಭೂ ವ್ಯವಹಾರಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಪ್ರಸ್ತಾಪಿಸಿರುವ ಸತ್ಯಶೋಧನಾ ಸಮಿತಿ ವರದಿ ಕುರಿತು ಸಚಿವ ಎಚ್.ಕೆ. ಪಾಟೀಲ್ ಪ್ರತಿಕ್ರಿಯೆ ನೀಡಿದ್ದು, ವರದಿಯನ್ನು ಮತ್ತೊಮ್ಮೆ ಪರಿಶೀಲಿಸಿದ ಬಳಿಕವೇ ತಮ್ಮ ಅಭಿಪ್ರಾಯವನ್ನು ತಿಳಿಸುವುದಾಗಿ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಅವರು ಯಾವ ಸತ್ಯಶೋಧನಾ ಸಮಿತಿಯ ವರದಿಯನ್ನು ಉಲ್ಲೇಖಿಸಿದ್ದಾರೆ ಎಂಬುದು ನನಗೆ ಈಗ ಸ್ಪಷ್ಟವಾಗಿಲ್ಲ. ನನ್ನ ನೆನಪನ್ನು ಮತ್ತೊಮ್ಮೆ ಪರಿಶೀಲಿಸಿಕೊಳ್ಳಬೇಕು.

ನಾನು ಸಾರ್ವಜನಿಕ ಲೆಕ್ಕಪತ್ರ ಸಮಿತಿ (PAC) ಅಧ್ಯಕ್ಷನಾಗಿದ್ದ ಸಂದರ್ಭದಲ್ಲಿ ಎಲ್ಲ ಸದಸ್ಯರನ್ನು ಸ್ಥಳಕ್ಕೆ ಕರೆದುಕೊಂಡು ಹೋಗಿದ್ದೆ. ಈಗಲ್ಟನ್, ಖೋಡೆ ಸೇರಿದಂತೆ ಹಲವು ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿತ್ತು. ಅವರು ಇದೇ ವರದಿಯ ಬಗ್ಗೆ ಹೇಳಿದ್ದಾರೆಯೇ ಎಂಬುದನ್ನು ಪರಿಶೀಲಿಸಿ ನಂತರ ಪ್ರತಿಕ್ರಿಯೆ ನೀಡುತ್ತೇನೆ ಎಂದು ಹೇಳಿದರು.

ಇದೇ ವೇಳೆ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರನ್ನು ಭೇಟಿ ಮಾಡಿದ ವಿಚಾರಕ್ಕೂ ಎಚ್.ಕೆ. ಪಾಟೀಲ್ ಸ್ಪಷ್ಟನೆ ನೀಡಿದರು. ಪರಮೇಶ್ವರ್ ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದ ಬಳಿಕ ನಾನು ಅವರನ್ನು ಭೇಟಿ ಮಾಡಲು ಬರುತ್ತೇನೆ ಎಂದು ದೂರವಾಣಿ ಮೂಲಕ ತಿಳಿಸಿದ್ದೆ. ಆದರೆ ಅವರೇ ‘ನಾನೇ ಬರುತ್ತೇನೆ’ ಎಂದು ಹೇಳಿ ನನ್ನನ್ನು ಭೇಟಿ ಮಾಡಿದರು.

ನಾವು ಸ್ನೇಹಿತರೆಲ್ಲ ಸೇರಿ ಆತ್ಮೀಯವಾಗಿ ಮಾತುಕತೆ ನಡೆಸಿದೆವು. ನಮ್ಮ ಉತ್ತರ ಕರ್ನಾಟಕ ಭಾಗದ ಕೆಲ ನಾಯಕರು ಅವರಿಗೆ ಸನ್ಮಾನ ಮಾಡಿದರು. ಬಳಿಕ ಚಹಾ ಕುಡಿಯುತ್ತಾ, ಉಪ್ಪಿಟ್ಟು ಸೇವಿಸುತ್ತಾ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದೇವೆ. ನಮ್ಮ ಸ್ನೇಹಿತರೊಬ್ಬರು ಉಪ ಮುಖ್ಯಮಂತ್ರಿಯಾಗಿರುವುದು ಸಂತಸದ ವಿಚಾರ ಎಂದು ಹೇಳಿದರು.

ಸಚಿವ ಸ್ಥಾನ ಸಿಗದಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಅಭಿಮಾನಿಗಳು ನಿರೀಕ್ಷೆ ಇಟ್ಟುಕೊಳ್ಳುವುದು ಸಹಜ. ಆದರೆ ಅದಕ್ಕಾಗಿ ಕಾಂಗ್ರೆಸ್ ನಾಯಕರ ಬಗ್ಗೆ ಅಸಮಾಧಾನ ಹೊಂದುವ ಪ್ರಶ್ನೆಯೇ ಇಲ್ಲ. ಸಚಿವ ಸ್ಥಾನಕ್ಕೆ ಸಂಬಂಧಿಸಿದ ಪ್ರಶ್ನೆಗಳನ್ನು ಮುಖ್ಯಮಂತ್ರಿ ಅಥವಾ ಎಐಸಿಸಿ ಅಧ್ಯಕ್ಷರನ್ನು ಕೇಳಬೇಕು ಎಂದರು.

ಎಐಸಿಸಿ ಅಧ್ಯಕ್ಷರೊಂದಿಗೆ ತಮ್ಮ ಸಂಬಂಧ ಹಲವು ದಶಕಗಳ ಹಿಂದಿನಿಂದಲೂ ಇದೆ ಎಂದು ತಿಳಿಸಿದ ಎಚ್.ಕೆ. ಪಾಟೀಲ್, ನಮ್ಮ ತಂದೆಯವರ ಕಾಲದಿಂದಲೂ ಉತ್ತಮ ಸಂಬಂಧವಿದೆ. ಅವರು ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿದ್ದಾಗ ನಾನು ವಿಧಾನ ಪರಿಷತ್‌ನಲ್ಲಿ ವಿರೋಧ ಪಕ್ಷದ ನಾಯಕನಾಗಿದ್ದೆ.

ಎಸ್ಎಂ ಕೃಷ್ಣ ಅವರ ಸಚಿವ ಸಂಪುಟದಲ್ಲಿ ಅವರು ಗೃಹ ಸಚಿವರಾಗಿದ್ದರೆ, ನಾನು ಜಲಸಂಪನ್ಮೂಲ ಸಚಿವನಾಗಿದ್ದೆ. ಬಳಿಕ ಆರ್‌ಡಿಪಿಆರ್ ಸಚಿವನಾಗಿಯೂ ಕಾರ್ಯನಿರ್ವಹಿಸಿದ್ದೇನೆ. ಸರ್ಕಾರದಲ್ಲಿ ಒಟ್ಟಿಗೆ ಕೆಲಸ ಮಾಡಿದ್ದೇವೆ. ನಮ್ಮ ನಡುವೆ ಸಾಮಾಜಿಕ ಮತ್ತು ವೈಯಕ್ತಿಕ ಸಂಬಂಧವೂ ಗಟ್ಟಿಯಾಗಿದೆ ಎಂದು ಹೇಳಿದರು.

ಮುಮ್ಮಡಿ ನಿರ್ವಾಣ ಮಹಾಸ್ವಾಮಿಗಳಿಗೆ ಕಣ್ಣೀರಿನ ವಿದಾಯ; ಅಂತಿಮ ದರ್ಶನ ಪಡೆದ ಸಿಎಂ, ಕೇಂದ್ರ ಸಚಿವರು

ರಾಮನಗರ: ಕನಕಪುರದ ಐತಿಹಾಸಿಕ ದೇಗುಲ ಮಠದ ಮುಮ್ಮಡಿ ನಿರ್ವಾಣ ಮಹಾಸ್ವಾಮಿಗಳು ಲಿಂಗೈಕ್ಯರಾದ ಹಿನ್ನೆಲೆಯಲ್ಲಿ ಮಠದ ಆವರಣದಲ್ಲಿ ಸಾವಿರಾರು ಭಕ್ತರು, ವಿವಿಧ ಮಠಾಧೀಶರು, ಗಣ್ಯರು ಹಾಗೂ ಸಾರ್ವಜನಿಕರು ಅಂತಿಮ ದರ್ಶನ ಪಡೆದು ಭಾವಪೂರ್ಣ ನಮನ ಸಲ್ಲಿಸಿದರು.

ದೇಶದ ವಿವಿಧ ಭಾಗಗಳಿಂದ ಆಗಮಿಸಿದ್ದ ಭಕ್ತರು ಶ್ರೀಗಳ ಪಾದಗಳಿಗೆ ನಮಸ್ಕರಿಸಿ ಅಂತಿಮ ವಿದಾಯ ಹೇಳಿದರು. ಈ ವೇಳೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ದೇಗುಲ ಮಠಕ್ಕೆ ಭೇಟಿ ನೀಡಿ ಶ್ರೀಗಳ ಅಂತಿಮ ದರ್ಶನ ಪಡೆದರು.

ಬಳಿಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಠಕ್ಕೆ ಆಗಮಿಸಿ ಮುಮ್ಮಡಿ ನಿರ್ವಾಣ ಮಹಾಸ್ವಾಮಿಗಳ ಪಾರ್ಥಿವ ಶರೀರಕ್ಕೆ ಪುಷ್ಪನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಚಿವ ಈಶ್ವರ್ ಖಂಡ್ರೆ, ಮಾಜಿ ಸಂಸದ ಡಿ.ಕೆ. ಸುರೇಶ್ ಹಾಗೂ ವಿಧಾನ ಪರಿಷತ್ ಸದಸ್ಯ ಎಸ್. ರವಿ ಕುಮಾರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಅಂತಿಮ ದರ್ಶನದ ವೇಳೆ ಶ್ರೀಗಳೊಂದಿಗಿನ ಆತ್ಮೀಯ ಒಡನಾಟವನ್ನು ಸ್ಮರಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾವುಕರಾಗಿ ಕಣ್ಣೀರು ಹಾಕಿದರು. ಬಳಿಕ ಶ್ರೀಗಳ ಪಾರ್ಥಿವ ಶರೀರದ ಮೇಲೆ ತ್ರಿವರ್ಣ ಧ್ವಜ ಹೊದಿಸಿ, ಮೂರು ಸುತ್ತು ಗುಂಡು ಹಾರಿಸುವ ಮೂಲಕ ಸಕಲ ಸರ್ಕಾರಿ ಗೌರವ ಸಲ್ಲಿಸಲಾಯಿತು.

ಸರ್ಕಾರಿ ಗೌರವದ ಅಂಗವಾಗಿ ತ್ರಿವರ್ಣ ಧ್ವಜವನ್ನು ಕಿರಿಯ ಶ್ರೀಗಳಿಗೆ ಹಸ್ತಾಂತರಿಸುವ ವೇಳೆ ಮುಖ್ಯಮಂತ್ರಿ ಗದ್ಗದಿತರಾದರು. ಶ್ರೀಗಳಿಗೆ ಕಣ್ಣೀರಿನ ವಿದಾಯ ಹೇಳಿದ ಬಳಿಕ ಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಸಚಿವ ಈಶ್ವರ್ ಖಂಡ್ರೆ ಮಠದ ಆವರಣದಲ್ಲೇ ಕೆಲಕಾಲ ಕುಳಿತು ಶ್ರೀಗಳ ಸೇವೆ ಮತ್ತು ಕೊಡುಗೆಗಳನ್ನು ಸ್ಮರಿಸಿ ನುಡಿನಮನ ಸಲ್ಲಿಸಿದರು.

ನೀಟ್ ಅಭ್ಯರ್ಥಿ ತಡವಾಗಿ ಬಂದಿದ್ದು ಟ್ರಾಫಿಕ್ ನಿಂದಲ್ಲ; ವದಂತಿಗಳಿಗೆ ಬೆಂಗಳೂರು ಪೊಲೀಸರು ಸ್ಪಷ್ಟನೆ

ಬೆಂಗಳೂರು: ನೀಟ್ (NEET) ಪರೀಕ್ಷೆಯ ಅಭ್ಯರ್ಥಿಯೊಬ್ಬರು ಪರೀಕ್ಷಾ ಕೇಂದ್ರಕ್ಕೆ ತಡವಾಗಿ ತಲುಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದ ವದಂತಿಗಳಿಗೆ ಬೆಂಗಳೂರು ನಗರ ಪೊಲೀಸ್ ಹಾಗೂ ಬೆಂಗಳೂರು ಸಂಚಾರ ಪೊಲೀಸ್ ಜಂಟಿಯಾಗಿ ಸ್ಪಷ್ಟನೆ ನೀಡಿವೆ.

ಸಾರ್ವಜನಿಕ ಕಾರ್ಯಕ್ರಮದಿಂದ ಉಂಟಾದ ಟ್ರಾಫಿಕ್ ದಟ್ಟಣೆಯ ಕಾರಣ ಅಭ್ಯರ್ಥಿ ಪರೀಕ್ಷಾ ಕೇಂದ್ರಕ್ಕೆ ತಡವಾಗಿ ತಲುಪಿದ್ದಾರೆ ಎಂಬ ಆರೋಪವನ್ನು ಪೊಲೀಸರು ಸಂಪೂರ್ಣವಾಗಿ ತಳ್ಳಿಹಾಕಿದ್ದು, ಸಿಸಿಟಿವಿ ದೃಶ್ಯಾವಳಿ, ಅಭ್ಯರ್ಥಿ ಹಾಗೂ ಪೋಷಕರೊಂದಿಗೆ ನಡೆಸಿದ ಸಂಭಾಷಣೆ ಮತ್ತು ಮಾರ್ಗ ವಿಶ್ಲೇಷಣೆಯ ಆಧಾರದ ಮೇಲೆ ಅಧಿಕೃತ ಫ್ಯಾಕ್ಟ್ ಚೆಕ್ ವರದಿಯನ್ನು ಬಿಡುಗಡೆ ಮಾಡಿದ್ದಾರೆ.

ಘಟನೆಯ ಸಮಯಾವಳಿ

  • ಮಧ್ಯಾಹ್ನ 12:57: ಅಭ್ಯರ್ಥಿ ಆರ್.ಟಿ. ನಗರದಲ್ಲಿರುವ ನಿವಾಸದಿಂದ ಹೊರಟರು.
  • ಮಧ್ಯಾಹ್ನ 1:30: ಪರೀಕ್ಷಾ ಕೇಂದ್ರ ಪ್ರವೇಶಿಸಲು ನಿಗದಿಪಡಿಸಿದ್ದ ಕೊನೆಯ ಸಮಯ.
  • ಮಧ್ಯಾಹ್ನ 1:33: ನಿಗದಿತ ಸಮಯ ಮುಗಿದ ಮೂರು ನಿಮಿಷಗಳ ಬಳಿಕ ಅಭ್ಯರ್ಥಿ ಪರೀಕ್ಷಾ ಕೇಂದ್ರದ ಆವರಣ ತಲುಪಿದರು.

ಪೊಲೀಸರ ಪ್ರಕಾರ, ಪರೀಕ್ಷಾ ಕೇಂದ್ರದ ಪ್ರವೇಶ ಮುಕ್ತಾಯಕ್ಕೆ ಕೇವಲ 33 ನಿಮಿಷ ಬಾಕಿ ಇರುವಾಗ ಅಭ್ಯರ್ಥಿ ಮನೆಯಿಂದ ಹೊರಟಿರುವುದು ಸಿಸಿಟಿವಿ ದೃಶ್ಯಾವಳಿಯಿಂದ ದೃಢಪಟ್ಟಿದೆ.

ತಪ್ಪು ಮಾರ್ಗವೇ ತಡಕ್ಕೆ ಕಾರಣ

ಪರಿಶೀಲನೆಯಲ್ಲಿ, ಕಡಿಮೆ ಸಮಯದಲ್ಲಿ ತಲುಪಬಹುದಾದ ಸುಲಭ ಹಾಗೂ ಹತ್ತಿರದ ಮಾರ್ಗಗಳಿದ್ದರೂ ಅಭ್ಯರ್ಥಿ ಹೆಚ್ಚು ಸಮಯ ತೆಗೆದುಕೊಳ್ಳುವ ಸುದೀರ್ಘ ಮಾರ್ಗವನ್ನು ಆಯ್ಕೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ಅಲ್ಲದೆ, ಘಟನೆ ನಡೆದ ದಿನ ನಗರದಲ್ಲಿ ಸಂಚಾರ ಪರಿಸ್ಥಿತಿ ಸಾಮಾನ್ಯವಾಗಿದ್ದು, ಸಾರ್ವಜನಿಕ ಕಾರ್ಯಕ್ರಮದಿಂದ ಯಾವುದೇ ಅಸಹಜ ಟ್ರಾಫಿಕ್ ದಟ್ಟಣೆ ಉಂಟಾಗಿರಲಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಅಭ್ಯರ್ಥಿ ಸಂಚರಿಸಿದ್ದ ಮಾರ್ಗದಲ್ಲಿ ಕರ್ತವ್ಯದಲ್ಲಿದ್ದ ಸಂಚಾರ ಪೊಲೀಸ್ ಸಿಬ್ಬಂದಿ ವಾಹನ ಸುಗಮವಾಗಿ ಸಾಗಲು ಅಗತ್ಯ ನೆರವು ನೀಡಿರುವುದೂ ಪರಿಶೀಲನೆಯಲ್ಲಿ ಕಂಡುಬಂದಿದೆ.

ವದಂತಿಗಳಿಗೆ ಪೊಲೀಸ್ ತೆರೆ

ಲಭ್ಯವಿರುವ ಎಲ್ಲಾ ತಾಂತ್ರಿಕ ಸಾಕ್ಷ್ಯಗಳನ್ನು ಪರಿಶೀಲಿಸಿದ ಬಳಿಕ, ಸಾರ್ವಜನಿಕ ಕಾರ್ಯಕ್ರಮದ ಟ್ರಾಫಿಕ್‌ನಿಂದ ಅಭ್ಯರ್ಥಿ ತಡವಾಗಿ ತಲುಪಿದ್ದಾರೆ ಎಂಬುದಕ್ಕೆ ಯಾವುದೇ ಪುರಾವೆ ಇಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ತಡವಾಗಿ ಮನೆಯಿಂದ ಹೊರಡುವುದು ಹಾಗೂ ಸೂಕ್ತ ಮಾರ್ಗವನ್ನು ಆಯ್ಕೆ ಮಾಡದಿರುವುದೇ ಪರೀಕ್ಷೆಗೆ ತಡವಾಗಲು ಪ್ರಮುಖ ಕಾರಣ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಗಮನಾರ್ಹವಾಗಿ, ಜೂನ್ 21ರಂದು ಅರಮನೆ ಮೈದಾನದಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿ ಆಯ್ಕೆಯಾದ ಬಿ.ಕೆ. ಹರಿಪ್ರಸಾದ್ ಅವರ ಪದಗ್ರಹಣ ಕಾರ್ಯಕ್ರಮ ನಡೆದಿದ್ದು, ಇದೇ ಕಾರ್ಯಕ್ರಮದಿಂದ ನೀಟ್ ಅಭ್ಯರ್ಥಿಗಳಿಗೆ ತೊಂದರೆಯಾಗಿದೆ ಎಂದು ಬಿಜೆಪಿ ಆರೋಪಿಸಿತ್ತು. ಇದೀಗ ಪೊಲೀಸ್ ವರದಿ ಆ ಆರೋಪವನ್ನು ನಿರಾಕರಿಸಿದೆ.

IPL: ಡೆಲ್ಲಿಗೆ ಮರಳಿದ ರಿಷಭ್ ಪಂತ್, ಲಕ್ನೋ ತಂಡ ಸೇರಿದ ಕುಲದೀಪ್ ಯಾದವ್!

0

ಮುಂಬೈ: ಮುಂಬರುವ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಆವೃತ್ತಿಗೆ ಮುನ್ನ ಎರಡು ಫ್ರಾಂಚೈಸಿಗಳ ನಡುವೆ ನಡೆದ ಹೈ-ಪ್ರೊಫೈಲ್ ಆಟಗಾರರ ವಿನಿಮಯದಲ್ಲಿ ಭಾರತದ ಸ್ಟಾರ್ ವಿಕೆಟ್‌ಕೀಪರ್-ಬ್ಯಾಟರ್ ರಿಷಭ್ ಪಂತ್ ಡೆಲ್ಲಿ ಕ್ಯಾಪಿಟಲ್ಸ್‌ಗೆ ಮರಳಿದ್ದು, ಸ್ಪಿನ್ ತಾರೆ ಕುಲದೀಪ್ ಯಾದವ್ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಸೇರಿದ್ದಾರೆ. ಈ ವಿನಿಮಯವನ್ನು ಐಪಿಎಲ್ ಅಧಿಕೃತವಾಗಿ ದೃಢಪಡಿಸಿದೆ.

2025ರ ಮೆಗಾ ಹರಾಜಿನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡ ರಿಷಭ್ ಪಂತ್ ಅವರನ್ನು ದಾಖಲೆಯ 27 ಕೋಟಿ ರೂಪಾಯಿಗೆ ಖರೀದಿಸಿತ್ತು. ಆದರೆ ಇದೀಗ ಅವರು 15 ಕೋಟಿ ರೂಪಾಯಿ ವೇತನಕ್ಕೆ ಡೆಲ್ಲಿ ಕ್ಯಾಪಿಟಲ್ಸ್‌ಗೆ ಮರಳುತ್ತಿದ್ದು, 12 ಕೋಟಿ ರೂಪಾಯಿ ವೇತನ ಕಡಿತವನ್ನು ಒಪ್ಪಿಕೊಂಡಿದ್ದಾರೆ.

ಇನ್ನೊಂದೆಡೆ, ಭಾರತದ ಪ್ರಮುಖ ಸ್ಪಿನ್ನರ್ ಕುಲದೀಪ್ ಯಾದವ್ ಡೆಲ್ಲಿ ಕ್ಯಾಪಿಟಲ್ಸ್ ತೊರೆದು ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಸೇರಿದ್ದಾರೆ. 13.5 ಕೋಟಿ ರೂಪಾಯಿ ವೇತನದಲ್ಲಿ ಅವರನ್ನು ಲಕ್ನೋ ತನ್ನ ತಂಡಕ್ಕೆ ಸೇರ್ಪಡೆ ಮಾಡಿಕೊಂಡಿದ್ದು, ತಂಡದ ಸ್ಪಿನ್ ವಿಭಾಗಕ್ಕೆ ಮತ್ತಷ್ಟು ಬಲ ದೊರೆತಿದೆ.

ಡೆಲ್ಲಿ ಕ್ಯಾಪಿಟಲ್ಸ್‌ಗೆ ಮರಳಿದರೂ ರಿಷಭ್ ಪಂತ್ ತಂಡದ ನಾಯಕತ್ವ ವಹಿಸಿಕೊಳ್ಳುವುದಿಲ್ಲ. ಅವರು ವಿಕೆಟ್‌ಕೀಪರ್-ಬ್ಯಾಟರ್ ಆಗಿಯೇ ತಂಡದಲ್ಲಿ ಆಡಲಿದ್ದು, ನಾಯಕತ್ವದ ಬಗ್ಗೆ ಫ್ರಾಂಚೈಸಿ ಪ್ರತ್ಯೇಕ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.

ಡೆಲ್ಲಿ ಕ್ಯಾಪಿಟಲ್ಸ್ ಕೋಚಿಂಗ್ ವಿಭಾಗದಲ್ಲೂ ಮಹತ್ವದ ಬದಲಾವಣೆಗಳಾಗುವ ಸಾಧ್ಯತೆ ಇದೆ. ಮಾಜಿ ಆಲ್‌ರೌಂಡರ್ ಯುವರಾಜ್ ಸಿಂಗ್ ತಂಡದ ಕೋಚಿಂಗ್ ಸಿಬ್ಬಂದಿಗೆ ಸೇರುವ ಸಾಧ್ಯತೆ ಇದೆ. ಆದರೆ ಅವರು ಮುಖ್ಯ ಕೋಚ್ ಅಲ್ಲ, ಬ್ಯಾಟಿಂಗ್ ಕೋಚ್ ಆಗಿ ಅಥವಾ ಕೋಚಿಂಗ್ ಸ್ಟಾಫ್‌ನ ಪ್ರಮುಖ ಸದಸ್ಯರಾಗಿ ಸೇರುವ ನಿರೀಕ್ಷೆಯಿದೆ ಎಂದು ವರದಿಗಳು ತಿಳಿಸಿವೆ.

ಸಂತ್ರಸ್ತೆ ಮದುವೆಯಾಗಿದ್ದರೂ ಪೋಕ್ಸೊ ಪ್ರಕರಣ ರದ್ದಾಗದು: ಹೈಕೋರ್ಟ್‌ನ ಮಹತ್ವದ ತೀರ್ಪು

ಬೆಂಗಳೂರು: ಸಂತ್ರಸ್ತೆ ಬೇರೊಬ್ಬರನ್ನು ಮದುವೆಯಾಗಿದ್ದಾರೆ ಎಂಬ ಕಾರಣಕ್ಕೆ ಪೋಕ್ಸೊ ಕಾಯ್ದೆಯಡಿ ದಾಖಲಾದ ಪ್ರಕರಣವನ್ನು ರದ್ದುಪಡಿಸಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಸ್ಪಷ್ಟಪಡಿಸಿದೆ.

ದೇವನಹಳ್ಳಿ ತಾಲೂಕಿನ ಪಾಲಾಕ್ಷ ಕುಮಾರ್ ಎಂಬುವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠ, ಪ್ರಕರಣ ರದ್ದುಪಡಿಸಲು ಯಾವುದೇ ಆಧಾರ ಇಲ್ಲ ಎಂದು ಮೌಖಿಕವಾಗಿ ಅಭಿಪ್ರಾಯ ವ್ಯಕ್ತಪಡಿಸಿತು.

ಅರ್ಜಿದಾರರು, ಸಂತ್ರಸ್ತೆ ಈಗ ಬೇರೊಬ್ಬರನ್ನು ಮದುವೆಯಾಗಿದ್ದು, ಪ್ರಕರಣದ ಇತರೆ ಆರೋಪಿಗಳು ಈಗಾಗಲೇ ಖುಲಾಸೆಯಾಗಿರುವುದರಿಂದ ತಮ್ಮ ವಿರುದ್ಧದ ವಿಚಾರಣೆಯನ್ನು ರದ್ದುಪಡಿಸಬೇಕು ಎಂದು ಕೋರಿದ್ದರು. ಆದರೆ ಇದನ್ನು ಪ್ರಶ್ನಿಸಿದ ನ್ಯಾಯಪೀಠ, ಪ್ರಕರಣದಲ್ಲಿ ಮೊದಲನೇ ಆರೋಪಿಯಾಗಿರುವ ಅರ್ಜಿದಾರನಿಗೆ ಇತರೆ ಆರೋಪಿಗಳ ಖುಲಾಸೆ ಹೇಗೆ ಅನ್ವಯಿಸುತ್ತದೆ ಎಂದು ಪ್ರಶ್ನಿಸಿತು.

ಈ ವೇಳೆ ಅರ್ಜಿದಾರರ ಪರ ವಕೀಲರು, ಸಂತ್ರಸ್ತೆ ರಾಜಿ ಸಂಧಾನದ ಮೂಲಕ ಪ್ರಕರಣ ಬಗೆಹರಿಸಿಕೊಳ್ಳಲು ಸಿದ್ಧರಾಗಿದ್ದಾರೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು. ಅದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, “ಸಂತ್ರಸ್ತೆ ಅರ್ಜಿದಾರನನ್ನು ಮದುವೆಯಾಗಿಲ್ಲ. ಬೇರೊಬ್ಬರನ್ನು ಮದುವೆಯಾದರೆ ಆರೋಪಿಯ ಮೇಲಿನ ಅಪರಾಧ ಹೇಗೆ ಅಳಿಸಿಹೋಗುತ್ತದೆ?” ಎಂದು ಪ್ರಶ್ನಿಸಿತು.

ಅರ್ಜಿದಾರರ ವಿರುದ್ಧ ಪೋಕ್ಸೊ ಕಾಯ್ದೆಯ ಸೆಕ್ಷನ್ 3 ಮತ್ತು 4 ಅಡಿಯಲ್ಲಿ ಲೈಂಗಿಕ ದೌರ್ಜನ್ಯ ಆರೋಪಗಳಿದ್ದು, ಇಂತಹ ಗಂಭೀರ ಆರೋಪಗಳನ್ನು ರಾಜಿ ಮೂಲಕ ಮುಕ್ತಾಯಗೊಳಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ತಿಳಿಸಿತು.

“ಸಂತ್ರಸ್ತೆ ಮದುವೆಯಾಗಿದ್ದಾರೆ ಎಂಬ ಕಾರಣಕ್ಕೆ ಅಪರಾಧವೇ ಅಳಿಸಿಹೋಗುವುದಿಲ್ಲ. ಅಪ್ರಾಪ್ತೆಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಯಾವುದೇ ಕಾರಣಕ್ಕೂ ರಾಜಿ ಮಾಡಿಕೊಳ್ಳಲು ಅಥವಾ ರದ್ದುಪಡಿಸಲು ಅವಕಾಶವಿಲ್ಲ. ಆರೋಪಿಯು ವಿಚಾರಣಾ ನ್ಯಾಯಾಲಯದ ಮುಂದೆ ಹಾಜರಾಗಿ ವಿಚಾರಣೆ ಎದುರಿಸಬೇಕು” ಎಂದು ಪೀಠ ಖಡಕ್ ಅಭಿಪ್ರಾಯ ವ್ಯಕ್ತಪಡಿಸಿತು.

ನ್ಯಾಯಾಲಯ ಅರ್ಜಿಯನ್ನು ವಜಾಗೊಳಿಸುವ ಸೂಚನೆ ನೀಡುತ್ತಿದ್ದಂತೆ, ಅರ್ಜಿದಾರರ ಪರ ವಕೀಲರು ಅರ್ಜಿಯನ್ನು ಹಿಂಪಡೆಯಲು ಅನುಮತಿ ಕೋರಿದರು. ಇದಕ್ಕೆ ನ್ಯಾಯಪೀಠ ಒಪ್ಪಿಗೆ ನೀಡಿ ಅರ್ಜಿ ಹಿಂಪಡೆಯಲು ಅವಕಾಶ ನೀಡಿತು.

ಕೃಷಿ ವಾಹನಗಳಿಗೂ ಟೋಲ್? ಮಂಡ್ಯದಲ್ಲಿ ರೈತರ ಪ್ರತಿಭಟನೆ: ಟೋಲ್ ಸ್ಟಿಕ್‌ಗಳು ಧ್ವಂಸ

0

ಮಂಡ್ಯ: ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್‌ವೇಯ ಗಣಂಗೂರು ಟೋಲ್ ಪ್ಲಾಜಾ ಬಳಿ ಕೃಷಿ ಉತ್ಪನ್ನ ಸಾಗಿಸುವ ವಾಹನಗಳಿಗೆ ಟೋಲ್ ಶುಲ್ಕ ವಿಧಿಸಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ರೈತರು ಭಾರೀ ಪ್ರತಿಭಟನೆ ನಡೆಸಿದ್ದಾರೆ.

ಟೋಲ್ ಸಂಗ್ರಹ ನೀತಿಯನ್ನು ಕಾನೂನುಬಾಹಿರ ಎಂದು ಘೋಷಿಸಿದ ರೈತರು ಸ್ಥಳದಲ್ಲಿ ಧ್ವಂಸಾತ್ಮಕ ಪ್ರತಿಭಟನೆ ನಡೆಸಿ ಟೋಲ್ ಸ್ಟಿಕ್‌ಗಳನ್ನು ಮುರಿದು ತಮ್ಮ ಆಕ್ರೋಶವನ್ನು ಹೊರಹಾಕಿದರು. ರೈತರಿಂದ ನಿರ್ಮಿಸಲಾದ ರಸ್ತೆಗಳಲ್ಲಿ ಈಗ ಅವರದೇ ಉತ್ಪನ್ನಗಳಿಗೆ ಟೋಲ್ ವಿಧಿಸುವುದು ಅನ್ಯಾಯ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನಾಕಾರರು ಕೇಂದ್ರ ಸರ್ಕಾರ ಹಾಗೂ ಹೆದ್ದಾರಿ ಪ್ರಾಧಿಕಾರದ ವಿರುದ್ಧ ಘೋಷಣೆ ಕೂಗಿ ಪರಿಸ್ಥಿತಿಯನ್ನು ಉದ್ವಿಗ್ನಗೊಳಿಸಿದರು. ಕೃಷಿ ವಾಹನಗಳಿಗೆ ಸಂಪೂರ್ಣ ಟೋಲ್ ವಿನಾಯಿತಿ ನೀಡಬೇಕು ಅಥವಾ ಪಂಜಾಬ್ ಮಾದರಿಯ ನೀತಿ ಜಾರಿಗೆ ತರಬೇಕು ಎಂದು ರೈತರು ಆಗ್ರಹಿಸಿದರು.

ಟೋಲ್ ಪಾವತಿ ಇಲ್ಲದೆ ಹಲವು ವಾಹನಗಳನ್ನು ಸ್ಥಳದಿಂದ ಕಳುಹಿಸಿದ ಘಟನೆಗಳು ನಡೆದಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಮಧ್ಯಪ್ರವೇಶಿಸಿದರು. ಪ್ರತಿಭಟನೆಯನ್ನು ಹಿಂಪಡೆಯುವಂತೆ ಮನವೊಲಿಸಲು ಪೊಲೀಸರು ಪ್ರಯತ್ನಿಸಿದರು.

ಈ ಸಂದರ್ಭದಲ್ಲಿ ಸ್ಥಳಕ್ಕೆ ಆಗಮಿಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಯನ್ನು ರೈತರು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ಕನ್ನಡ ಭಾಷೆ ತಿಳಿದಿಲ್ಲ ಎಂಬ ಅಧಿಕಾರಿಯ ಹೇಳಿಕೆಯಿಂದ ರೈತರು ಮತ್ತಷ್ಟು ಆಕ್ರೋಶಗೊಂಡರು.

ಸ್ಥಳೀಯ ಆಡಳಿತದಲ್ಲಿ ಕನ್ನಡ ಬಲ್ಲ ಅಧಿಕಾರಿಗಳನ್ನು ನೇಮಿಸಬೇಕು ಎಂದು ರೈತರು ಪಟ್ಟು ಹಿಡಿದಿದ್ದು, ಈ ಘಟನೆ ಮಂಡ್ಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.

ತ್ರಿಷಾ–ವಿಜಯ್ ಸಂಬಂಧಕ್ಕೆ ಬ್ರೇಕ್? ಇನ್‌ಸ್ಟಾಗ್ರಾಮ್ ಅನ್‌ಫಾಲೋ, ಜನ್ಮದಿನದಂದು ಸೈಲೆಂಟ್‌ ಅದ ನಟಿ

ಚೆನ್ನೈ: ದಳಪತಿ ವಿಜಯ್ ಅವರ ಜನ್ಮದಿನದಂದು ನಟಿ ತ್ರಿಷಾ ಕೃಷ್ಣನ್ ಯಾವುದೇ ಶುಭಾಶಯ ಪೋಸ್ಟ್ ಹಂಚಿಕೊಳ್ಳದಿರುವುದು ಹಾಗೂ ಸಾಮಾಜಿಕ ಜಾಲತಾಣದಲ್ಲಿ ವಿಜಯ್ ಅವರನ್ನು ಅನ್‌ಫಾಲೋ ಮಾಡಿರುವುದು ಕಾಲಿವುಡ್‌ನಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.

ಅನಗತ್ಯ ಗಾಸಿಪ್‌ಗಳು ಹಾಗೂ ಟ್ರೋಲ್‌ಗಳನ್ನು ತಪ್ಪಿಸಲು ತ್ರಿಷಾ ಈ ರೀತಿಯ ನಿರ್ಧಾರ ತೆಗೆದುಕೊಂಡಿರಬಹುದು ಎಂಬ ಊಹಾಪೋಹಗಳು ಹರಿದಾಡುತ್ತಿದ್ದರೂ, ಈ ಬೆಳವಣಿಗೆ ಸಂಬಂಧಿತ ಕುತೂಹಲವನ್ನು ಹೆಚ್ಚಿಸಿದೆ. ಇನ್‌ಸ್ಟಾಗ್ರಾಮ್‌ನಲ್ಲಿ ಅನ್‌ಫಾಲೋ ವಿಷಯ ಬಹಿರಂಗವಾಗುತ್ತಿದ್ದಂತೆಯೇ ಅಭಿಮಾನಿಗಳು ವಿವಿಧ ರೀತಿಯ ಪ್ರತಿಕ್ರಿಯೆ ನೀಡುತ್ತಿದ್ದಾರೆ.

ಹಿಂದಿನ ಕೆಲವು ತಿಂಗಳುಗಳಲ್ಲಿ ವಿಜಯ್ ಮತ್ತು ಅವರ ಪತ್ನಿ ಸಂಗೀತಾ ನಡುವೆ ವೈವಾಹಿಕ ಭಿನ್ನಾಭಿಪ್ರಾಯಗಳ ಸುದ್ದಿಗಳು ಹರಿದಾಡಿದ್ದವು. ಇದೇ ಸಮಯದಲ್ಲಿ ವಿಜಯ್ ಮತ್ತು ತ್ರಿಷಾ ನಡುವೆ ಆಪ್ತತೆ ಹೆಚ್ಚಾಗಿದೆ ಎಂಬ ಗಾಸಿಪ್ ಕೂಡ ಬಲವಾಗಿತ್ತು.

ಇವರಿಬ್ಬರ ಸ್ನೇಹದ ಬಗ್ಗೆ ರಾಜಕೀಯ ವಲಯಕ್ಕೂ ಚರ್ಚೆ ಹರಡಿದ್ದು, ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’ ಪಕ್ಷದ ಮೂಲಕ ತ್ರಿಷಾ ರಾಜಕೀಯ ಪ್ರವೇಶ ಮಾಡಲಿದ್ದಾರೆ ಎಂಬ ಊಹಾಪೋಹಗಳು ಸಾಮಾಜಿಕ ಹಾಗೂ ಸಿನಿಮಾ ವಲಯದಲ್ಲಿ ಗಮನ ಸೆಳೆದಿದ್ದವು.

ಈಗ ತ್ರಿಷಾ ಅವರ ಮೌನ ಮತ್ತು ಅನ್‌ಫಾಲೋ ನಡೆ ಹಿನ್ನೆಲೆಯಲ್ಲಿ ವಿಜಯ್ ಅವರ ವೈವಾಹಿಕ ಜೀವನ ಸುಧಾರಣೆಯ ಹಂತದಲ್ಲಿದೆ ಎಂಬ ಮತ್ತೊಂದು ಚರ್ಚೆಯೂ ನಡೆಯುತ್ತಿದೆ. ಕುಟುಂಬದ ಹಿರಿಯರ ಮಧ್ಯಸ್ಥಿಕೆಯಲ್ಲಿ ಸಂಬಂಧ ಸುಧಾರಣೆ ಪ್ರಯತ್ನಗಳು ನಡೆಯುತ್ತಿವೆ ಎಂಬ ಮಾತುಗಳು ಹರಿದಾಡುತ್ತಿವೆ.

ಆದರೆ ಈ ಎಲ್ಲಾ ವಿಚಾರಗಳ ಕುರಿತು ಯಾವುದೇ ಅಧಿಕೃತ ಸ್ಪಷ್ಟನೆ ಹೊರಬಂದಿಲ್ಲ. ಕಾಲಿವುಡ್ ವಲಯದಲ್ಲಿ ಈ ವಿಷಯ ಇದೀಗ ಹಾಟ್ ಟಾಪಿಕ್ ಆಗಿದ್ದು, ಮುಂದಿನ ದಿನಗಳಲ್ಲಿ ಸ್ಪಷ್ಟತೆ ದೊರೆಯುವ ನಿರೀಕ್ಷೆಯಿದೆ.

error: Content is protected !!