ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾದ ದಿನವೇ ರಾಜಧಾನಿ ಬೆಂಗಳೂರಿನ ಹೆಬ್ಬಾಳ ವ್ಯಾಪ್ತಿಯಲ್ಲಿ ವಿದ್ಯಾರ್ಥಿನಿಯೊಬ್ಬಳು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮನೋರಾಯನಪಾಳ್ಯದಲ್ಲಿ ವಾಸವಾಗಿದ್ದ ತನುಶ್ರೀ (18) ಮೃತಪಟ್ಟ ವಿದ್ಯಾರ್ಥಿನಿಯಾಗಿದ್ದಾರೆ.
ಗುರುವಾರ ಮಧ್ಯಾಹ್ನ ಸುಮಾರು 3 ಗಂಟೆ ವೇಳೆಗೆ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ತನುಶ್ರೀ ಶವ ಪತ್ತೆಯಾಗಿದೆ. ಪ್ರಾಥಮಿಕವಾಗಿ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣಳಾದ ಕಾರಣ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎಂದು ತಾಯಿ ಆಶಾ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಆದರೆ, ಈ ಪ್ರಕರಣಕ್ಕೆ ಇದೀಗ ತಿರುವು ಸಿಕ್ಕಿದ್ದು, ಮೃತಳ ಸಂಬಂಧಿಕರು ತಾಯಿಯ ಮೇಲೆಯೇ ಅನುಮಾನ ವ್ಯಕ್ತಪಡಿಸಿದ್ದಾರೆ. ಘಟನೆ ಮಧ್ಯಾಹ್ನವೇ ನಡೆದಿದ್ದರೂ, ರಾತ್ರಿ 10 ಗಂಟೆಯವರೆಗೂ ಪೊಲೀಸರಿಗೆ ಮಾಹಿತಿ ನೀಡದೇ ಇರುವುದರ ಬಗ್ಗೆ ಪ್ರಶ್ನೆಗಳು ಕೇಳಿಬಂದಿವೆ. ಅಲ್ಲದೆ, ಪೊಲೀಸರಿಗೆ ತಿಳಿಸದೇ ಕೆಲವರ ಸಹಾಯದಿಂದ ತಾಯಿಯೇ ಮೃತದೇಹವನ್ನು ಕೆಳಗಿಳಿಸಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ.
ಮೃತಳ ಸಹೋದರ ಧನುಷ್ ಮಾತನಾಡಿ, ತನುಶ್ರೀ ಮಾನಸಿಕವಾಗಿ ಬಲಿಷ್ಠಳಾಗಿದ್ದು, ಆತ್ಮಹತ್ಯೆ ಮಾಡಿಕೊಳ್ಳುವಂತಹ ಹುಡುಗಿ ಅಲ್ಲ ಎಂದು ಹೇಳಿದ್ದಾರೆ. ತಾಯಿ ಆಶಾ ಅವರ ನಡೆ ಸಂಶಯಾಸ್ಪದವಾಗಿದ್ದು, ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಬೇಕೆಂದು ಅವರು ಆಗ್ರಹಿಸಿದ್ದಾರೆ.
ಇನ್ನೊಂದೆಡೆ, ಕುಟುಂಬದಲ್ಲಿ ವೈಯಕ್ತಿಕ ಕಲಹಗಳಿದ್ದವು ಎಂಬುದೂ ಬೆಳಕಿಗೆ ಬಂದಿದ್ದು, ಇದೇ ಹಿನ್ನೆಲೆ ಘಟನೆ ನಡೆದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಸದ್ಯ ಮೃತದೇಹವನ್ನು ಕೆ.ಜಿ. ಹಳ್ಳಿಯ ಅಂಬೇಡ್ಕರ್ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಇರಿಸಲಾಗಿದೆ. ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರೆಸಿದ್ದಾರೆ.

