ವಿಜಯಸಾಕ್ಷಿ ಸುದ್ದಿ, ಗದಗ: ಕರ್ನಾಟಕ ರಾಜ್ಯದ ಸಮಗ್ರ ಅಭಿವೃದ್ಧಿ ಹಾಗೂ ಶೋಷಿತ ಸಮುದಾಯಗಳ ಕಲ್ಯಾಣಕ್ಕಾಗಿ ಯೋಜನೆಗಳನ್ನು ರೂಪಿಸುವ ಸಲುವಾಗಿ ಮುಂಬರುವ ಬಜೆಟ್ನಲ್ಲಿ ಆದ್ಯತೆ ನೀಡಬೇಕೆಂದು ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಪದಾಧಿಕಾರಿಗಳು ಆಗ್ರಹಿಸಿದರು.
ಗದಗ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಜಿಲ್ಲಾಧ್ಯಕ್ಷ ಬಿಲಾಲ್ ಗೋಕಾವಿ, ಎಸ್.ಡಿ.ಪಿ.ಐ ಪಕ್ಷದ ವತಿಯಿಂದ ಈಗಾಗಲೇ ಜನತಾ ಬಜೆಟ್ ಪುಸ್ತಕದಲ್ಲಿ ಮಂಡಿಸಿರುವ ಎಲ್ಲಾ ಜನಪರ ಯೋಜನೆಗಳಿಗೆ ಹಣ ಮೀಸಲಿಡಬೇಕು, ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಿಗೆ ವಿಶೇಷ ಆದ್ಯತೆ ನೀಡಬೇಕು, ವಿಶೇಷವಾಗಿ ಗದಗ ಜಿಲ್ಲೆಯಲ್ಲಿ ಹಲವು ವರ್ಷಗಳಿಂದ ಹಲವು ಜ್ವಲಂತ ಸಮಸ್ಯೆಗಳು ಇದ್ದು, ಜಿಲ್ಲೆಯಲ್ಲಿನ ನಿರುದ್ಯೋಗ ಸಮಸ್ಯೆ ಹೋಗಲಾಡಿಸಲು ಸಣ್ಣ ಮತ್ತು ಬೃಹತ್ ಕೈಗಾರಿಕೆಗಳ ಸ್ಥಾಪನೆ ಮತ್ತು ಉತ್ತೇಜನ ನೀಡಬೇಕು ಎಂದು ಒತ್ತಾಯಿಸಿದರು.
ಗದಗ-ಬೆಟಗೇರಿ ಅವಳಿ ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು, ಕುಡಿಯುವ ನೀರಿನ 24*7 ಕುಡಿಯುವ ನೀರಿನ ಯೋಜನೆ ಅಪೂರ್ಣಗೊಂಡಿದ್ದು, ಶೀಘ್ರವೇ ಪೂರ್ಣಗೊಳಿಸಿ ನಗರದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಗದಗ-ಬೆಟಗೇರಿ ನಗರದಲ್ಲಿ ರಸ್ತೆ, ಒಳಚರಂಡಿ, ಬೀದಿ ದೀಪ ಸೇರಿದಂತೆ ಮೂಲಭೂತ ಸೌಕರ್ಯಗಳಿಗೆ ವಿಶೇಷ ಹಣ ಬಿಡುಗಡೆ ಮಾಡಬೇಕು. ಗದಗ ನಗರ ಕೇಂದ್ರದಲ್ಲಿ ರಕ್ತ ಭಂಡಾರ ನಿರ್ಮಿಸುವುದು, ವಿಶ್ವವಿದ್ಯಾಲಯ ಸ್ಥಾಪನೆ, ಬೆಟಗೇರಿ ಭಾಗದಲ್ಲಿ ಅಲ್ಪಸಂಖ್ಯಾತ ಮೌಲಾನಾ ಆಜಾದ್ ಆಂಗ್ಲ ಮಾಧ್ಯಮ ಶಾಲೆ ನಿರ್ಮಾಣ, ಅಲ್ಪಸಂಖ್ಯಾತ ಹಾಸ್ಟೆಲ್ ನಿರ್ಮಾಣ, ನರಗುಂದ ಹಾಗೂ ಗದಗ ನಗರದಲ್ಲಿ ಅಲ್ಪಸಂಖ್ಯಾತರ ಶಾದಿಮಹಲ್ ನಿರ್ಮಾಣ ಮಾಡಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಎಸ್.ಡಿ.ಪಿ.ಐ ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಫ್ಫಾನ್ ತರಾಫ್ದರ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಅನ್ವರ್ ಬಾಗೇವಾಡಿ, ಜಿಲ್ಲಾ ಖಜಾಂಚಿ ಮದಾರ್ಶಾಹ್ ಮಕಾನದಾರ್, ಗದಗ ಕ್ಷೇತ್ರ ಸಮಿತಿ ಕಾರ್ಯದರ್ಶಿ ಸಮೀರ್ ಕೊಟ್ಟೂರ್, ಶಿರಹಟ್ಟಿ ಕ್ಷೇತ್ರ ಸಮಿತಿ ಅಧ್ಯಕ್ಷ ಇಸ್ಮಾಯಿಲ್ ನದಾಫ್ ಹಾಗೂ ಕಾರ್ಯದರ್ಶಿ ಅಬ್ದುಲ್ಖಾದರ್ ಕಾಗದಗಾರ, ಫಯಾಜ್ ಪಟೇಲ್, ಮುಸ್ತಾಕ್ ಹೊಸಮನಿ, ಮುಬಾರಕ್ ಗದಗ, ಮುಸ್ತಾಕ್ ಕಟ್ಟಿಮನಿ, ಅಷ್ಪಾಕ್ ಧಾರವಾಡ, ವಾಸೀಮ್ ರಬಕವಿ, ವಿಮೆನ್ ಇಂಡಿಯಾ ಮೂವ್ಮೆಂಟ್ ಅಧ್ಯಕ್ಷರಾದ ಸುಮಯ್ಯ ಬಳ್ಳಾರಿ, ಕಾರ್ಯದರ್ಶಿ ಕಾಜಲ್ ಬಾಗೇವಾಡಿ ಉಪಸ್ಥಿತರಿದ್ದರು.
ನರಗುಂದದಲ್ಲಿ ನಿರ್ಮಿಸುತ್ತಿರುವ ಆಚಾರ್ಯ ಪ್ಲಾಟ್ ಮನೆಗಳ ಸಂಖ್ಯೆ ಹೆಚ್ಚಿಸಬೇಕು, ಶಿರಹಟ್ಟಿ ಪಟ್ಟಣದಲ್ಲಿ ಅನಾವರಣಗೊಂಡು ದುಃಸ್ಥಿತಿಯಲ್ಲಿರುವ ಎಪಿಎಂಸಿ ಮಾರುಕಟ್ಟೆ ಸಮರ್ಪಕ ಬಳಕೆಗೆ ವಿಶೇಷ ಯೋಜನೆ, ಜಿಲ್ಲೆಯ ಈ ಎಲ್ಲ ಸಮಸ್ಯೆಗಳಿಗೆ ಈ ಬಜೆಟ್ ಮಂಡನೆಯಲ್ಲಿ ವಿಶೇಷ ಹಣಕಾಸು ಪ್ಯಾಕೇಜ್ ನೀಡಬೇಕೆಂದು ಸರ್ಕಾರವನ್ನು ಆಗ್ರಹಿಸಿದರು.

