Home Blog

ಬಂಜಾರ ಸಮುದಾಯದ ಮುಖಂಡ ಐ.ಎಸ್. ಪೂಜಾರ ಬಿಜೆಪಿ ಸೇರ್ಪಡೆ

0

ವಿಜಯಸಾಕ್ಷಿ ಸುದ್ದಿ, ಗದಗ: ಬಂಜಾರ ಸಮುದಾಯದ ಪ್ರಭಾವಿ ಯುವ ಮುಖಂಡ ಐ.ಎಸ್. ಪೂಜಾರ ಅವರು ಗುರುವಾರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಸಮ್ಮುಖದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು.

ಪ್ರಧಾನಿ ನರೇಂದ್ರ ಮೋದಿ ಅವರ ಕಳೆದ 12 ವರ್ಷಗಳ ಆಡಳಿತ, ಅಭಿವೃದ್ಧಿ ಪರ ದೃಷ್ಟಿಕೋನ ಹಾಗೂ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಯುವ ನಾಯಕತ್ವದಿಂದ ಪ್ರೇರಿತರಾಗಿ ಪಕ್ಷ ಸೇರ್ಪಡೆಯಾಗಿರುವುದಾಗಿ ಐ.ಎಸ್. ಪೂಜಾರ ತಿಳಿಸಿದ್ದಾರೆ.

ಶಿರಹಟ್ಟಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯನ್ನು ಇನ್ನಷ್ಟು ಬಲಪಡಿಸುವ ಉದ್ದೇಶದಿಂದ ತಮ್ಮ ಅಪಾರ ಬೆಂಬಲಿಗರು, ಸಮಾಜದ ಮುಖಂಡರು ಹಾಗೂ ಕ್ಷೇತ್ರದ ಪ್ರಮುಖ ನಾಯಕರೊಂದಿಗೆ ಪಕ್ಷ ಸೇರಿರುವುದಾಗಿ ಅವರು ಹೇಳಿದರು.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಶರಣು ತಳ್ಳಿಕೇರಿ, ಶಿರಹಟ್ಟಿ ಬಂಜಾರ ಸಮಾಜದ ಅಧ್ಯಕ್ಷ ಶಿವಣ್ಣ ಲಮಾಣಿ, ಕಾರ್ಯದರ್ಶಿ ಪುಂಡಲೀಕ ಲಮಾಣಿ, ಬಿಜೆಪಿ ಮುಖಂಡರಾದ ಥಾವರೆಪ್ಪ ಲಮಾಣಿ ಹಾಗೂ ದೇವಿಹಾಳದ ರೆಡ್ಡಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಶಾಲೆಯಿಂದ ಯಾವ ಮಗುವೂ ಹೊರಗುಳಿಯಬಾರದು: ಕವಿತಾ ದಂಡಿನ

0

ವಿಜಯಸಾಕ್ಷಿ ಸುದ್ದಿ, ಗದಗ: ಪ್ರತಿಯೊಂದು ಮಗುವಿಗೂ ಶಿಕ್ಷಣದ ಹಕ್ಕು ದೊರೆಯಬೇಕು ಎಂಬ ಉದ್ದೇಶದಿಂದ ಬೆಟಗೇರಿಯಲ್ಲಿ ವಿಶೇಷ ದಾಖಲಾತಿ ಆಂದೋಲನಕ್ಕೆ ಚಾಲನೆ ನೀಡಲಾಗಿದ್ದು, ಪಾಲಕರು ತಮ್ಮ ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ದಾಖಲಿಸುವ ಮೂಲಕ ಅಭಿಯಾನಕ್ಕೆ ಕೈಜೋಡಿಸಬೇಕು ಎಂದು ಸಂಪನ್ಮೂಲ ವ್ಯಕ್ತಿ ಕವಿತಾ ದಂಡಿನ ಕರೆ ನೀಡಿದರು.

ಬೆಟಗೇರಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ.1 ಹಾಗೂ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ನಂ.2ರ ಶಿಕ್ಷಕರು ಮತ್ತು ಸಮುದಾಯದ ಸದಸ್ಯರೊಂದಿಗೆ ಕಬಾಡಿ ಓಣಿ, ಮಜ್ಜಗಿ ಓಣಿ ಹಾಗೂ ಕಲ್ಮಠ ಓಣಿ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಮನೆ-ಮನೆಗೆ ತೆರಳಿ ವಿಶೇಷ ದಾಖಲಾತಿ ಆಂದೋಲನ ನಡೆಸಿ ಅವರು ಮಾತನಾಡಿದರು.

ವಿಶೇಷ ದಾಖಲಾತಿ ಆಂದೋಲನವು ಕೇವಲ ಮಕ್ಕಳ ದಾಖಲಾತಿಗೆ ಸೀಮಿತವಾಗಿಲ್ಲ. ಪ್ರತಿಯೊಬ್ಬ ಮಗುವಿಗೂ ಗುಣಮಟ್ಟದ ಶಿಕ್ಷಣ ಒದಗಿಸುವ ಸಾಮಾಜಿಕ ಬದ್ಧತೆಯಾಗಿದೆ. ಸಮುದಾಯದ ಸಹಭಾಗಿತ್ವದಿಂದ ಮಾತ್ರ ಯಾವುದೇ ಮಗು ಶಾಲೆಯಿಂದ ಹೊರಗುಳಿಯದಂತೆ ನೋಡಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಗದಗ-ಬೆಟಗೇರಿ ನಗರಸಭೆ ಸದಸ್ಯ ಚಂದ್ರು ಕರಿಸೋಮನಗೌಡ್ರ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣದ ಜೊತೆಗೆ ಶಿಸ್ತು, ಆತ್ಮವಿಶ್ವಾಸ ಹಾಗೂ ಉತ್ತಮ ನಾಗರಿಕ ಗುಣಗಳನ್ನು ಬೆಳೆಸುವ ವಾತಾವರಣವಿದ್ದು, ಪಾಲಕರು ಸರ್ಕಾರಿ ಶಾಲೆಗಳ ಮೇಲೆ ವಿಶ್ವಾಸವಿಟ್ಟು ಮಕ್ಕಳನ್ನು ದಾಖಲಿಸಬೇಕು ಎಂದು ಮನವಿ ಮಾಡಿದರು.

ಶಿಕ್ಷಣ ಸಂಯೋಜಕ ಮುರಳಿ ಸೋಲಾಪುರ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಉಚಿತ ಪಠ್ಯಪುಸ್ತಕ, ಸಮವಸ್ತ್ರ, ಮಧ್ಯಾಹ್ನದ ಬಿಸಿಯೂಟ, ವಿದ್ಯಾರ್ಥಿವೇತನ ಸೇರಿದಂತೆ ಹಲವು ಸೌಲಭ್ಯಗಳು ಲಭ್ಯವಿದ್ದು, ಪಾಲಕರು ಅವುಗಳ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಹೇಳಿದರು.

ಮುಖ್ಯೋಪಾಧ್ಯಾಯಿನಿ ಗೀತಾ ದೇವಂಗಮಠ ಮಾತನಾಡಿ, ದಾಖಲಾತಿ ಆಂದೋಲನದಿಂದ ಮಕ್ಕಳ ಶಿಕ್ಷಣದ ಬಗ್ಗೆ ಪಾಲಕರಲ್ಲಿ ಹೆಚ್ಚಿನ ಜಾಗೃತಿ ಮೂಡುತ್ತಿದ್ದು, ಮಕ್ಕಳನ್ನು ನಿಯಮಿತವಾಗಿ ಶಾಲೆಗೆ ಕಳುಹಿಸುವ ಮನೋಭಾವವೂ ಹೆಚ್ಚುತ್ತಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಶಿಕ್ಷಕಿ ಎಸ್.ವಿ. ಕೇಸರಿ, ಪೋಷಕರಾದ ರಾಘವೇಂದ್ರ ಕಬಾಡಿ, ಲಕ್ಷ್ಮಣಸಿಂಗ್ ಗಿಡ್ಡಿಮನಿ, ಶ್ರದ್ಧಾ ಕಬಾಡಿ, ಪಾರ್ವತಿಬಾಯಿ ರಜಪೂತ, ಮುನಿರಾಬೇಗಂ ಹವಾಲ್ದಾರ್, ಬಿ.ಬಿ. ಜಾನ್ ಈಟಿ, ರೇಣುಕಾಬಾಯಿ ಮರಿಯಾಳ, ಮಂಜುನಾಥ ಹಾದಿಮನಿ, ಕಾಶೀನಾಥ ಅರವಟಗಿ, ಮಂಜಣ್ಣ ದಿಂಡಿ, ರಾಜು ಕಬಾಡಿ, ಅಶೋಕ ಬಿರಾದಾರ, ಆಕಾಶ ಅರವಟಗಿ, ರಾಜು ಶಿಂಧೆ, ಗಗನ ಕಬಾಡಿ ಹಾಗೂ ಹೇಮಂತ ರಜಪೂತ ಸೇರಿದಂತೆ ಹಲವರು ಭಾಗವಹಿಸಿದ್ದರು.

“ವಿಶೇಷ ದಾಖಲಾತಿ ಆಂದೋಲನವು ಕೇವಲ ದಾಖಲಾತಿ ಅಭಿಯಾನವಲ್ಲ; ಪ್ರತಿಯೊಂದು ಮಗುವಿನ ಶಿಕ್ಷಣದ ಹಕ್ಕು ಸಾಕಾರಗೊಳಿಸುವ ಸಾಮಾಜಿಕ ಹೊಣೆಗಾರಿಕೆಯಾಗಿದೆ. ಸಮುದಾಯದ ಸಹಕಾರದಿಂದ ಮಾತ್ರ ‘ಯಾವ ಮಗು ಶಾಲೆಯಿಂದ ಹೊರಗುಳಿಯದ’ ಗುರಿ ಸಾಧಿಸಲು ಸಾಧ್ಯ.”

– ಕವಿತಾ ದಂಡಿನ

ಗದಗ ಮಾರ್ಗಕ್ಕೆ ಇನ್ನಷ್ಟು ರೈಲು ಓಡಿಸಿ

0

ವಿಜಯಸಾಕ್ಷಿ ಸುದ್ದಿ, ಗದಗ: ಬಳ್ಳಾರಿ–ಹೊಸಪೇಟೆ–ಕೊಪ್ಪಳ–ಗದಗ–ಹುಬ್ಬಳ್ಳಿ ಹಾಗೂ ಬಾಗಲಕೋಟೆ–ವಿಜಯಪುರ ಮಾರ್ಗಗಳಲ್ಲಿ ರೈಲುಗಳ ಸಂಖ್ಯೆ ತೀರಾ ಕಡಿಮೆಯಿರುವುದರಿಂದ ಈ ಭಾಗದ ಪ್ರಯಾಣಿಕರಿಗೆ ತೀವ್ರ ತೊಂದರೆಯಾಗುತ್ತಿದೆ. ಆದ್ದರಿಂದ ಈ ಮಾರ್ಗಗಳಲ್ಲಿ ಹೆಚ್ಚಿನ ಹೊಸ ರೈಲುಗಳನ್ನು ಆರಂಭಿಸುವಂತೆ ಕೊಪ್ಪಳ ಲೋಕಸಭಾ ಸದಸ್ಯ ರಾಜಶೇಖರ ಹಿಟ್ನಾಳ ಅವರಿಗೆ ಗದಗ ಜಿಲ್ಲಾ ವಿಕಾಸ ವೇದಿಕೆ ಅಧ್ಯಕ್ಷ ವಿಶ್ವನಾಥ ಖಾನಾಪೂರ ಮನವಿ ಸಲ್ಲಿಸಿದರು.

ಬಳ್ಳಾರಿಯಿಂದ ಹುಬ್ಬಳ್ಳಿ ಮಾರ್ಗಕ್ಕೆ ಮುಂಜಾನೆ ಕೆಲವೇ ರೈಲುಗಳಿದ್ದು, ಮಧ್ಯಾಹ್ನ ಹಾಗೂ ಸಂಜೆ ವೇಳೆಯಲ್ಲಿ ಪ್ರಯಾಣಿಕರಿಗೆ ಸೂಕ್ತ ರೈಲು ಸಂಪರ್ಕ ಇಲ್ಲದಿರುವುದು ವಿದ್ಯಾರ್ಥಿಗಳು, ವ್ಯಾಪಾರಸ್ಥರು, ಉದ್ಯಮಿಗಳು ಹಾಗೂ ಸಾರ್ವಜನಿಕರಿಗೆ ಸಮಸ್ಯೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮಧ್ಯಂತರ ವೇಳೆಯಲ್ಲಿಯೂ ಹೊಸ ರೈಲುಗಳನ್ನು ಓಡಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಕುಷ್ಟಗಿ, ಗಂಗಾವತಿ ಹಾಗೂ ಸಿಂಧನೂರು ಭಾಗಕ್ಕೂ ರೈಲು ಸಂಚಾರದ ಕೊರತೆ ಇರುವುದರಿಂದ ಈ ಭಾಗಗಳಿಗೂ ಹೊಸ ರೈಲು ಸೇವೆ ಆರಂಭಿಸಬೇಕು ಎಂದು ಆಗ್ರಹಿಸಲಾಗಿದೆ.

ಬೆಂಗಳೂರು–ರಾಯದುರ್ಗ–ಬಳ್ಳಾರಿ–ಹೊಸಪೇಟೆ–ಕೊಪ್ಪಳ–ಗದಗ–ಹುಬ್ಬಳ್ಳಿ–ಬಾಗಲಕೋಟೆ–ವಿಜಯಪುರ ಮಾರ್ಗದಲ್ಲಿ ಹೊಸ ರೈಲುಗಳನ್ನು ಸಂಚರಿಸಿದರೆ ಪ್ರಯಾಣಿಕರಿಗೆ ಅನುಕೂಲವಾಗುವುದರ ಜೊತೆಗೆ ವ್ಯಾಪಾರ, ಪ್ರವಾಸೋದ್ಯಮ ಹಾಗೂ ಕೈಗಾರಿಕಾ ಬೆಳವಣಿಗೆಗೂ ಉತ್ತೇಜನ ಸಿಗಲಿದೆ ಎಂದು ಮನವಿಯಲ್ಲಿ ವಿವರಿಸಲಾಗಿದೆ.

ಈಗಾಗಲೇ ಗದಗ–ಸೊಲ್ಲಾಪುರ ರೈಲು ಮಾರ್ಗ ದ್ವಿಪಥವಾಗಿರುವ ಹಿನ್ನೆಲೆಯಲ್ಲಿ ಗದಗವನ್ನು ಪ್ರಮುಖ ರೈಲು ಜಂಕ್ಷನ್ ಆಗಿ ಅಭಿವೃದ್ಧಿಪಡಿಸಿ, ಮುಂಬೈ, ಪುಣೆ, ಅಹಮದಾಬಾದ್, ಜೈಪುರ, ದೆಹಲಿ, ಆಂಧ್ರಪ್ರದೇಶ ಹಾಗೂ ತಮಿಳುನಾಡು ಸೇರಿದಂತೆ ವಿವಿಧ ರಾಜ್ಯಗಳಿಗೆ ನೇರ ರೈಲು ಸಂಪರ್ಕ ಕಲ್ಪಿಸುವಂತೆ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಹಾಗೂ ರಾಜ್ಯ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರ ಗಮನಕ್ಕೆ ತರಬೇಕೆಂದು ಸಂಸದರಿಗೆ ಮನವಿ ಮಾಡಲಾಗಿದೆ.

ಮನವಿ ಸಲ್ಲಿಸುವ ಸಂದರ್ಭದಲ್ಲಿ ಜಗದೀಶ ಕಂಗೂರಿ, ವೆಂಕಟೇಶ ಕಬಾಡಿ, ವೀರಭದ್ರಪ್ಪ ಕಬ್ಬಿಣದ, ಬಸವರಾಜ ಜರತಕನಿ, ರಜಾಕ್ ನೂರಭಾಷ ಸೇರಿದಂತೆ ಗದಗ ಜಿಲ್ಲಾ ವಿಕಾಸ ವೇದಿಕೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

“ಬಳ್ಳಾರಿ–ಕೊಪ್ಪಳ–ಗದಗ–ಹುಬ್ಬಳ್ಳಿ ಮಾರ್ಗದಲ್ಲಿ ಹೊಸ ರೈಲುಗಳನ್ನು ಆರಂಭಿಸಿದರೆ ಈ ಭಾಗದ ಪ್ರಯಾಣಿಕರು, ವಿದ್ಯಾರ್ಥಿಗಳು ಹಾಗೂ ವ್ಯಾಪಾರ ವಹಿವಾಟಿಗೆ ಹೆಚ್ಚಿನ ಅನುಕೂಲವಾಗಲಿದೆ.”

– ವಿಶ್ವನಾಥ ಖಾನಾಪೂರ

ಜು.26ರಂದು ನರೇಗಲ್ಲದಲ್ಲಿ ಕಾರ್ಗಿಲ್ ವಿಜಯೋತ್ಸವ

0

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಕಾರ್ಗಿಲ್ ವಿಜಯೋತ್ಸವದ ಅಂಗವಾಗಿ ಜುಲೈ 26ರಂದು ನರೇಗಲ್ಲದಲ್ಲಿ ನಿವೃತ್ತ ಸೈನಿಕರ ಸಂಘದ ವತಿಯಿಂದ ವಿಜಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಶಿವಪುತ್ರಪ್ಪ ಸಂಗನಾಳ ತಿಳಿಸಿದರು.

ಪಟ್ಟಣದ ನಿವೃತ್ತ ಸೈನಿಕರ ಸಂಘದ ಕಚೇರಿಯಲ್ಲಿ ಬುಧವಾರ ನಡೆದ ಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಾರ್ಗಿಲ್ ಯುದ್ಧದಲ್ಲಿ ದೇಶ ರಕ್ಷಣೆಗಾಗಿ ಪ್ರಾಣಾರ್ಪಣೆ ಮಾಡಿದ ವೀರಯೋಧರ ತ್ಯಾಗವನ್ನು ಸ್ಮರಿಸುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯವಾಗಿದೆ. ಎಲ್ಲ ನಿವೃತ್ತ ಸೈನಿಕರು ಸಮವಸ್ತ್ರದಲ್ಲಿ ಭಾಗವಹಿಸಿ ಕಾರ್ಯಕ್ರಮಕ್ಕೆ ಮೆರಗು ತರಬೇಕು ಎಂದು ಮನವಿ ಮಾಡಿದರು.

ಕಾರ್ಗಿಲ್ ಯುದ್ಧದ ಸಂದರ್ಭದಲ್ಲಿ ಪಾಕಿಸ್ತಾನದ ಒಳನುಸುಳುವಿಕೆ ಯತ್ನವನ್ನು ಭಾರತೀಯ ಸೈನಿಕರು ಧೈರ್ಯದಿಂದ ಹಿಮ್ಮೆಟ್ಟಿಸಿ ದೇಶದ ಗಡಿಯನ್ನು ರಕ್ಷಿಸಿದ ಸಾಹಸವನ್ನು ಸ್ಮರಿಸಿದ ಅವರು, ಅಂದಿನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ನಾಯಕತ್ವ ಹಾಗೂ ಯೋಧರ ಶೌರ್ಯ ದೇಶದ ಇತಿಹಾಸದಲ್ಲಿ ಅಜರಾಮರವಾಗಿದೆ ಎಂದು ಹೇಳಿದರು.

ಸಭೆಯಲ್ಲಿ ಇತ್ತೀಚೆಗೆ ನಿಧನರಾದ ಮೇಜರ್ ರಾಮಣ್ಣ ಸಕ್ರೋಜಿ ಹಾಗೂ ಸಂಘದ ಸದಸ್ಯ ದಾವಲಸಾಬ ಕಿಲ್ಲೇದಾರ ಅವರ ತಾಯಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಸದಸ್ಯರು ಅಗಲಿದವರ ಸೇವೆಯನ್ನು ಸ್ಮರಿಸಿ ನುಡಿನಮನ ಸಲ್ಲಿಸಿದರು.

ಗಾಂಧಿ ಭವನ ಅಭಿವೃದ್ಧಿಗೆ ಪಟ್ಟಣ ಪಂಚಾಯಿತಿ ₹3.50 ಲಕ್ಷ ಅನುದಾನ ಮಂಜೂರು ಮಾಡಿರುವುದಕ್ಕೆ ಸಭೆಯಲ್ಲಿ ಕೃತಜ್ಞತೆ ಸಲ್ಲಿಸಲಾಯಿತು. ಚಂದ್ರಶೇಖರ ಹರ್ತಿ ಅವರು ₹16,400 ಮೌಲ್ಯದ ಪಿಎ ವ್ಯವಸ್ಥೆ ಕೊಡುಗೆಯಾಗಿ ನೀಡಿದ್ದಕ್ಕಾಗಿ ಅವರನ್ನು ಅಭಿನಂದಿಸಲಾಯಿತು. ಮೇಜರ್ ರಾಮಣ್ಣ ಸಕ್ರೋಜಿ ಅವರ ನಿಧನದಿಂದ ತೆರವಾದ ಗೌರವಾಧ್ಯಕ್ಷ ಸ್ಥಾನಕ್ಕೆ ಶರಣಪ್ಪ ನಾಶಿಪುಡಿ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಹೊಸ ಸದಸ್ಯ ಆನಂದ ರಾಚನಗೌಡರ ಅವರನ್ನು ಸಂಘಕ್ಕೆ ಬರಮಾಡಿಕೊಳ್ಳಲಾಯಿತು.

ಸಭೆಯಲ್ಲಿ ಶಿವಪ್ಪ ಶಿವಾಪುರ, ಸಂಗಪ್ಪ ಕುಷ್ಟಗಿ, ರಾಮಪ್ಪ ರೋಣದ, ಕುಮಾರಸ್ವಾಮಿ ಕೋರಧಾನ್ಯಮಠ, ಪ್ರಭುದೇವ ಮುಕ್ಕನಗೌಡ್ರ, ಮಂದಾಲಪ್ಪ ಸಂಗನಾಳ, ಗುರುಶಾಂತಗೌಡ ಮಲ್ಲನಗೌಡ್ರ, ಸಿದ್ರಾಮಪ್ಪ ಕಟ್ಟಿಮನಿ, ಮಲ್ಲಪ್ಪ ಕಡೆತೋಟದ, ಉಮೇಶ ಕರಮುಡಿ, ಈರಪ್ಪ ದೊಡ್ಡಣ್ಣವರ, ಶಿವಾನಂದ ಬಂಡಿಹಾಳ, ಬಸವೇಶ್ವರ ಚಿಕ್ಕೊಪ್ಪದ, ಈಶ್ವರಚಂದ್ರ ಬಾಗಲಿ, ಬಸವರಾಜ ಯಕ್ಕುಂಡಿ, ಸುಮಿತ್ರಾ ದಳವಾಯಿ, ಬಸವರಾಜ ಕಡೆತೋಟದ, ಇಮಾಮಸಾಬ ಕೋಲಕಾರ, ಮಲ್ಲಮ್ಮ ಭೈರಗೊಂಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.

“ಕಾರ್ಗಿಲ್ ವಿಜಯೋತ್ಸವವು ದೇಶಭಕ್ತಿಯ ಸಂಕೇತ. ಯುವ ಪೀಳಿಗೆಗೆ ಯೋಧರ ತ್ಯಾಗದ ಅರಿವು ಮೂಡಿಸಲು ಎಲ್ಲ ನಿವೃತ್ತ ಸೈನಿಕರು ಸಮವಸ್ತ್ರದಲ್ಲಿ ಭಾಗವಹಿಸಬೇಕು.”

– ಶಿವಪುತ್ರಪ್ಪ ಸಂಗನಾಳ, ಅಧ್ಯಕ್ಷರು, ನಿವೃತ್ತ ಸೈನಿಕರ ಸಂಘ

₹80 ಲಕ್ಷ ವೆಚ್ಚದ ರಸ್ತೆ ಕಾಮಗಾರಿಗೆ ಚಾಲನೆ

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ತಾಲೂಕಿನ ಕುಂದ್ರಳ್ಳಿ ಗ್ರಾಮದಲ್ಲಿ ಮುಖ್ಯಮಂತ್ರಿಗಳ ಮೂಲಸೌಲಭ್ಯ ಅಭಿವೃದ್ಧಿ ಯೋಜನೆ (ಸಿಎಂಐಡಿಪಿ) ಅಡಿಯಲ್ಲಿ ₹80 ಲಕ್ಷ ವೆಚ್ಚದಲ್ಲಿ ಅಡರಕಟ್ಟಿ–ಕುಂದ್ರಳ್ಳಿ–ನಾದಿಗಟ್ಟಿ ಜಿಲ್ಲಾ ಮುಖ್ಯ ರಸ್ತೆಯ ಆಯ್ದ ಭಾಗದಲ್ಲಿ ನಿರ್ಮಾಣವಾಗಲಿರುವ ಸಿಸಿ ರಸ್ತೆ ಕಾಮಗಾರಿಗೆ ಶಾಸಕ ಡಾ. ಚಂದ್ರು ಲಮಾಣಿ ಭೂಮಿಪೂಜೆ ನೆರವೇರಿಸಿದರು.

ಭೂಮಿಪೂಜೆ ಬಳಿಕ ಮಾತನಾಡಿದ ಅವರು, ಶಾಸಕನಾದ ಬಳಿಕ ತಾಲೂಕಿನ ಹದಗೆಟ್ಟ ರಸ್ತೆಗಳನ್ನು ಅಭಿವೃದ್ಧಿಪಡಿಸಲು ವಿವಿಧ ಯೋಜನೆಗಳಡಿ ಅನುದಾನ ತಂದು ಹಲವು ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ವಿರೋಧ ಪಕ್ಷದ ಸರ್ಕಾರವಿದ್ದರೂ ಕ್ಷೇತ್ರದ ಅಭಿವೃದ್ಧಿಗೆ ಯಾವುದೇ ಕೊರತೆಯಾಗದಂತೆ ಪ್ರಯತ್ನಿಸುತ್ತಿದ್ದೇನೆ ಎಂದು ಹೇಳಿದರು.

ಬಟ್ಟೂರ–ಕುಂದ್ರಳ್ಳಿ ಸಂಪರ್ಕ ರಸ್ತೆ ಹಲವು ವರ್ಷಗಳಿಂದ ಹದಗೆಟ್ಟಿದ್ದು, ಸಾರ್ವಜನಿಕರ ಬಹುದಿನಗಳ ಬೇಡಿಕೆಗೆ ಇದೀಗ ಸ್ಪಂದಿಸಲಾಗಿದೆ. ಅಡರಕಟ್ಟಿ–ಕುಂದ್ರಳ್ಳಿ–ನಾದಿಗಟ್ಟಿ ಜಿಲ್ಲಾ ಮುಖ್ಯ ರಸ್ತೆಯು ಗದಗ, ಹೊಸಪೇಟೆ ಸೇರಿದಂತೆ ವಿವಿಧ ಭಾಗಗಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯಾಗಿದ್ದು, ಕಾಮಗಾರಿ ಪೂರ್ಣಗೊಂಡರೆ ಸಾರ್ವಜನಿಕರ ಸಂಚಾರಕ್ಕೆ ಅನುಕೂಲವಾಗಲಿದೆ ಎಂದರು.

ಕ್ಷೇತ್ರದ ಹಲವು ರಸ್ತೆಗಳು ಇನ್ನೂ ಅಭಿವೃದ್ಧಿ ನಿರೀಕ್ಷೆಯಲ್ಲಿದ್ದು, ಹಿಂದುಳಿದ ಪ್ರದೇಶವಾಗಿರುವ ಹಿನ್ನೆಲೆಯಲ್ಲಿ ಗ್ರಾಮೀಣ ರಸ್ತೆ ಅಭಿವೃದ್ಧಿಗೆ ವಿಶೇಷ ಅನುದಾನ ನೀಡುವಂತೆ ಮುಖ್ಯಮಂತ್ರಿ ಹಾಗೂ ಲೋಕೋಪಯೋಗಿ ಸಚಿವರಿಗೆ ಮನವಿ ಮಾಡಿರುವುದಾಗಿ ತಿಳಿಸಿದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನೀಲವ್ವ ಕಳಸದ, ಉಪಾಧ್ಯಕ್ಷೆ ಮಲ್ಲವ್ವ ತಳವಾರ, ಮಂಜುನಾಥ ಗೌರಿ, ಮಂಜಪ್ಪ ಕಳಸದ, ಗಂಗಾಧರ ಮೆಣಸಿನಕಾಯಿ, ಕಲ್ಲಪ್ಪ ಹಡಪದ, ಶಂಕರ ಲಮಾಣಿ, ಈಶ್ವರ ಲಮಾಣಿ, ರುದ್ರಯ್ಯ ಶಿಲವಂತಮಠ, ಸುರೇಶ ಲಮಾಣಿ, ಬಸವರಾಜ ಲಮಾಣಿ, ಬಸನಗೌಡ ಪಾಟೀಲ, ಹಾಲಪ್ಪ ಹಂಗನಕಟ್ಟಿ, ಅಭಿವೃದ್ಧಿ ಅಧಿಕಾರಿ ಹನಮಂತಪ್ಪ ಲಮಾಣಿ, ಲೋಕೋಪಯೋಗಿ ಇಲಾಖೆ ಇಂಜಿನಿಯರ್ ಮಲ್ಲಿಕಾರ್ಜುನ ಮೇತ್ರಿ, ಗುತ್ತಿಗೆದಾರ ರಾಜು ಅಂಗಡಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

“ನನ್ನ ಅಧಿಕಾರಾವಧಿಯಲ್ಲಿ ತಾಲೂಕಿನ ಪ್ರಮುಖ ರಸ್ತೆಗಳನ್ನು ಅಭಿವೃದ್ಧಿಪಡಿಸುವ ಗುರಿ ಹೊಂದಿದ್ದೇನೆ. ಹಿಂದುಳಿದ ಗ್ರಾಮೀಣ ಪ್ರದೇಶಗಳ ರಸ್ತೆ ಅಭಿವೃದ್ಧಿಗೆ ಸರ್ಕಾರ ಇನ್ನಷ್ಟು ವಿಶೇಷ ಅನುದಾನ ನೀಡಬೇಕು.”

– ಡಾ. ಚಂದ್ರು ಲಮಾಣಿ, ಶಾಸಕ

ಮಹಿಳಾ ಆರೋಗ್ಯ ಸೇವೆಗೆ ಡಾ. ಪ್ರಭಾ ದೇಸಾಯಿಗೆ ಗೌರವ

0

ವಿಜಯಸಾಕ್ಷಿ ಸುದ್ದಿ, ಗದಗ: ವೈದ್ಯರು ಕೇವಲ ರೋಗಕ್ಕೆ ಚಿಕಿತ್ಸೆ ನೀಡುವವರಲ್ಲ, ರೋಗಿಗಳ ಬದುಕಿಗೆ ಹೊಸ ಭರವಸೆ ನೀಡುವ ದೇವತಾಸಮಾನ ವ್ಯಕ್ತಿತ್ವಗಳಾಗಿದ್ದಾರೆ ಎಂದು ಜೈಂಟ್ಸ್ ಗ್ರೂಪ್ ಆಫ್ ಸಖಿ ಸಹೇಲಿ ಗದಗ ಅಧ್ಯಕ್ಷೆ ಶ್ರೀಮತಿ ಹೇಮ ಪೊಂಗೋಲಿಯ ಹೇಳಿದರು.

ವೈದ್ಯರ ದಿನಾಚರಣೆ ಅಂಗವಾಗಿ ಜೈಂಟ್ಸ್ ಗ್ರೂಪ್ ಆಫ್ ಸಖಿ ಸಹೇಲಿ ವತಿಯಿಂದ ಸಮಾಜಸೇವೆ ಹಾಗೂ ಮಹಿಳಾ ಆರೋಗ್ಯ ಕ್ಷೇತ್ರದಲ್ಲಿ ವಿಶಿಷ್ಟ ಸೇವೆ ಸಲ್ಲಿಸಿರುವ ಖ್ಯಾತ ಸ್ತ್ರೀರೋಗ ತಜ್ಞೆ, ಎಂಡೋಸ್ಕೋಪಿ ಶಸ್ತ್ರಚಿಕಿತ್ಸಕಿ ಹಾಗೂ ಸ್ಪರ್ಶ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಮುಖ್ಯಸ್ಥೆ ಡಾ. ಪ್ರಭಾ ಡಿ. ದೇಸಾಯಿ ಅವರನ್ನು ಸನ್ಮಾನಿಸಿ ಅವರು ಮಾತನಾಡಿದರು.

ಕಳೆದ ಎರಡು ದಶಕಗಳಿಂದ ಮಹಿಳಾ ಆರೋಗ್ಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಡಾ. ಪ್ರಭಾ ದೇಸಾಯಿ ಅವರು ಅನೇಕ ರಾಜ್ಯ ಹಾಗೂ ರಾಷ್ಟ್ರೀಯ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. ಇತ್ತೀಚೆಗೆ ‘ಸುವರ್ಣ ಸಾಧಕಿ–2026’ ಪ್ರಶಸ್ತಿಗೂ ಆಯ್ಕೆಯಾಗಿದ್ದಾರೆ. ಗದಗ ಆಬ್ಸ್ಟೆಟ್ರಿಕ್ ಮತ್ತು ಗೈನಕಾಲಜಿಕಲ್ ಸೊಸೈಟಿ (GOGS) ಅಧ್ಯಕ್ಷೆಯಾಗಿ ಎರಡು ಬಾರಿ ಸೇವೆ ಸಲ್ಲಿಸಿರುವ ಅವರು ವೈದ್ಯಕೀಯ ಶಿಕ್ಷಣ, ಸಂಶೋಧನೆ ಹಾಗೂ ಉಚಿತ ಮಹಿಳಾ ಆರೋಗ್ಯ ತಪಾಸಣಾ ಶಿಬಿರಗಳ ಮೂಲಕ ಸಮಾಜಮುಖಿ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಪ್ರಶಂಸಿಸಲಾಯಿತು.

ಕಾರ್ಯಕ್ರಮದಲ್ಲಿ ಕಾರ್ಯದರ್ಶಿ ಶ್ರೀಮತಿ ಚಂದ್ರಕಲಾ ಸ್ಥಾವರಮಠ ಕಾರ್ಯಕ್ರಮ ನಿರೂಪಿಸಿದರು. ನಿರ್ದೇಶಕರಾದ ಶ್ರೀಮತಿ ನಿರ್ಮಲಾ ಪಾಟೀಲ ಹಾಗೂ ಶ್ರೀಮತಿ ಆಶಾ ಪಟ್ಟಣಶೆಟ್ಟಿ ಪರಿಚಯಿಸಿದರು. ಖಜಾಂಚಿ ಅನುರಾಧ ಅಮಾತ್ಯಗೌಡರ ಸ್ವಾಗತಿಸಿದರು. ಸದಸ್ಯೆಯರಾದ ರೇಖಾ ರೊಟ್ಟಿ ಮತ್ತು ಶಶಿಕಲಾ ಮಾಲಿಪಾಟೀಲ ಉಪಸ್ಥಿತರಿದ್ದರು.

ಸಾಯಿ ಮಂದಿರದಲ್ಲಿ ಜು. 19ರಿಂದ ಗುರು ಪೂರ್ಣಿಮೋತ್ಸವ

0

ವಿಜಯಸಾಕ್ಷಿ ಸುದ್ದಿ, ಗದಗ: ಗದಗ-ಬೆಟಗೇರಿಯ ಶ್ರೀ ಶಿರಡಿ ಸಾಯಿಬಾಬಾ ಸತ್ಸಂಗದ ವತಿಯಿಂದ “ಶ್ರೀ ಗುರು ಪೂರ್ಣಿಮೋತ್ಸವ–2026” ಅಂಗವಾಗಿ ಜುಲೈ 19ರಿಂದ 29ರವರೆಗೆ ಹಾತಲಗೇರಿ ರಸ್ತೆಯ ಶ್ರೀ ಶಿರಡಿ ಸಾಯಿಬಾಬಾ ಮಂದಿರದಲ್ಲಿ ವಿವಿಧ ಧಾರ್ಮಿಕ, ಆಧ್ಯಾತ್ಮಿಕ ಹಾಗೂ ಭಕ್ತಿಪರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಉತ್ಸವದ ಅಂಗವಾಗಿ ಜುಲೈ 19ರಿಂದ 28ರವರೆಗೆ ಪ್ರತಿದಿನ ಸಂಜೆ 7ರಿಂದ 8 ಗಂಟೆಯವರೆಗೆ ಹಿರಿಯ ಆಧ್ಯಾತ್ಮಿಕ ಚಿಂತಕ ಡಾ. ಎಸ್.ಬಿ. ಶೆಟ್ಟರ ಅವರಿಂದ ಶ್ರೀ ಸಾಯಿ ಸಚ್ಚರಿತ್ರೆ ಪ್ರವಚನ ಮಾಲಿಕೆ ನಡೆಯಲಿದೆ. ಸಾಯಿಬಾಬರ ಜೀವನ ಸಂದೇಶ, ಗುರುಭಕ್ತಿ, ಸೇವೆ, ಸತ್ಯ, ಸದಾಚಾರ ಹಾಗೂ ಮಾನವೀಯ ಮೌಲ್ಯಗಳ ಕುರಿತು ಭಕ್ತರಿಗೆ ಪ್ರವಚನ ನೀಡಲಾಗುವುದು.

ಜುಲೈ 22ರಿಂದ 28ರವರೆಗೆ ಪ್ರತಿದಿನ ಬೆಳಿಗ್ಗೆ 10ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಸಾಮೂಹಿಕ ಶ್ರೀ ಸಾಯಿ ಸಚ್ಚರಿತ್ರೆ ಪಾರಾಯಣ ಕಾರ್ಯಕ್ರಮ ನಡೆಯಲಿದೆ.

ಜುಲೈ 26ರಂದು ಬೆಳಿಗ್ಗೆ 9 ಗಂಟೆಯಿಂದ ಜೋಳಿಗೆ ಭಿಕ್ಷೆ ಕಾರ್ಯಕ್ರಮ ಆಯೋಜಿಸಲಾಗಿದ್ದು, ಶ್ರೀ ಸಾಯಿ ಮಂದಿರದಿಂದ ವಿವೇಕಾನಂದ ಬಡಾವಣೆ ಹಾಗೂ ಕರಿಯಮ್ಮಕಲ್ಲ ಬಡಾವಣೆ ಮಾರ್ಗವಾಗಿ ಶ್ರೀ ರಾಘವೇಂದ್ರಸ್ವಾಮಿ ಮಠದ ಮೂಲಕ ಮೆರವಣಿಗೆ ಮರಳಿ ಮಂದಿರಕ್ಕೆ ಆಗಮಿಸಲಿದೆ.

ಉತ್ಸವದ ಸಮಾರೋಪದ ಅಂಗವಾಗಿ ಜುಲೈ 29ರಂದು ಶ್ರೀ ಶಿರಡಿ ಸಾಯಿಬಾಬಾರ ಸಮಾಧಿ ಶತಾಬ್ದಿ ಸ್ಮರಣೋತ್ಸವ ಹಾಗೂ ಗುರು ಪೂರ್ಣಿಮೆ ವಿಶೇಷ ಆಚರಣೆ ನಡೆಯಲಿದ್ದು, ಕಾಕಡ ಆರತಿ, ಮಂಗಳಸ್ನಾನ, ರುದ್ರಾಭಿಷೇಕ, ಅಲಂಕಾರ ಪೂಜೆ, ಮಹಾಪೂಜೆ, ಅನ್ನಸಂತರ್ಪಣೆ, ಸಾಮೂಹಿಕ ಶ್ರೀ ಸಾಯಿ ಸತ್ಯನಾರಾಯಣ ಪೂಜೆ, ಧೂಪಾರತಿ ಹಾಗೂ ಶೇಜಾರತಿ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ.

ಭಕ್ತರು ಮಹಾಅನ್ನಸಂತರ್ಪಣೆಗಾಗಿ ದವಸ-ಧಾನ್ಯ ಅಥವಾ ನಗದು ರೂಪದಲ್ಲಿ ದೇಣಿಗೆ ನೀಡಬಹುದಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸಾಯಿನಾಥರ ಕೃಪೆಗೆ ಪಾತ್ರರಾಗುವಂತೆ ಶ್ರೀ ಶಿರಡಿ ಸಾಯಿಬಾಬಾ ಸತ್ಸಂಗದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಮನವಿ ಮಾಡಿದ್ದಾರೆ.

ಜನಪದ ಕಲೆ ಉಳಿದರೆ ಸಂಸ್ಕೃತಿ ಉಳಿಯುತ್ತದೆ: ಬಸವರಾಜ ಬಳ್ಳಾರಿ

0

ವಿಜಯಸಾಕ್ಷಿ ಸುದ್ದಿ, ಗದಗ: ಜನಪದ ಕಲೆ, ತಾತ್ವಿಕ ವಿಚಾರ ಮತ್ತು ಸಂಗೀತದ ಸೊಗಡನ್ನು ಒಂದೇ ವೇದಿಕೆಯಲ್ಲಿ ಅನಾವರಣಗೊಳಿಸಿದ ‘ತಾತ್ವಿಕ ಜನಪದ ಸೌರಭ’ ಕಾರ್ಯಕ್ರಮ ನಗರದ ಹೊಸಪೇಟೆ ಚಕ್‌ನ ಕಾಳಿಕಾದೇವಿ ಸಮುದಾಯ ಭವನದಲ್ಲಿ ಸಾಂಸ್ಕೃತಿಕ ರಂಗು ತುಂಬಿತು. ಚಿನ್ಮಯ ಸಾಂಸ್ಕೃತಿಕ ಅಕಾಡೆಮಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ, ಬೆಂಗಳೂರು ಸಹಯೋಗದಲ್ಲಿ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಬಸವರಾಜ ಬಳ್ಳಾರಿ, ಸಾಂಪ್ರದಾಯಿಕ ಕಲೆ ಹಾಗೂ ಕಲಾವಿದರನ್ನು ಉಳಿಸಿ ಬೆಳೆಸಲು ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ಸಾಂಸ್ಕೃತಿಕ ಸಂಘಟನೆಗಳು ಹಾಗೂ ಕಲಾವಿದರು ಅವುಗಳ ಪ್ರಯೋಜನ ಪಡೆಯಬೇಕು ಎಂದು ಹೇಳಿದರು.

ಚಿನ್ಮಯ ಸಾಂಸ್ಕೃತಿಕ ಅಕಾಡೆಮಿ ಕಳೆದ 15 ವರ್ಷಗಳಿಂದ ಸಮಾಜಮುಖಿ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಮಕ್ಕಳಲ್ಲಿ ರಂಗಾಸಕ್ತಿ ಬೆಳೆಸುತ್ತಿದ್ದು, ಗದುಗಿನ ಸಾಂಸ್ಕೃತಿಕ ವಲಯದಲ್ಲಿ ಮಾದರಿ ಸಂಸ್ಥೆಯಾಗಿ ಗುರುತಿಸಿಕೊಂಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಪತ್ರಕರ್ತ ಸೂರಜ್ ಮಯೇಕರ ಅವರು ‘ಮಣ್ಣಿನ ಕಲಾಕೃತಿಗಳು’ ವಿಷಯದ ಕುರಿತು ಉಪನ್ಯಾಸ ನೀಡಿದರು. ಶಿವು ಭಜಂತ್ರಿ ಮತ್ತು ತಂಡ ಹಾಗೂ ಬಂಜಾರ ಅಕಾಡೆಮಿ ಸದಸ್ಯೆ ಸಾವಿತ್ರಿ ಲಮಾಣಿ ಅವರ ತಾತ್ವಿಕ ಜನಪದ ಗಾಯನ ಸಭಿಕರ ಮನಗೆದ್ದಿತು.

ಕರ್ನಾಟಕ ಜನಪದ ಅಕಾಡೆಮಿ ಸದಸ್ಯ ಶಂಕ್ರಣ್ಣ ಸಂಕಣ್ಣವರ ಜನಪದ ಸಂಸ್ಕೃತಿಯ ಬೆಳವಣಿಗೆಯ ಕುರಿತು ಮಾತನಾಡಿದರು. ಬೆಟಗೇರಿ ಶ್ರೀಕಾಳಿಕಾದೇವಿ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಶ್ರೀಧರ ಕೊಣ್ಣೂರ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಸುರೇಶ ಕೊಪ್ಪದ, ಡಾ. ದತ್ತಪ್ರಸನ್ನ ಲ. ಪಾಟೀಲ, ವಿಶ್ವನಾಥ ಯ. ಕಮ್ಮಾರ, ಎನ್.ಐ. ಪತ್ತಾರ, ಶ್ರೀನಿವಾಸ ಹುಬ್ಬಳ್ಳಿ, ವಿಶ್ವನಾಥ ಬೇಂದ್ರೆ, ಸತೀಶ ಹೊರಪೇಟೆ, ಪ್ರಕಾಶ ಬಡಿಗೇರ ಸೇರಿದಂತೆ ಅನೇಕರು ಭಾಗವಹಿಸಿದ್ದರು. ಶ್ರೀಮತಿ ಸಾವಿತ್ರಿ ಲಮಾಣಿ ಪ್ರಾರ್ಥಿಸಿದರು. ಅಶೋಕ ಸುತಾರ ಸ್ವಾಗತಿಸಿದರು. ಮೌನೇಶ ಸಿ. ಬಡಿಗೇರ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿಶ್ವನಾಥ ಯ. ಕಮ್ಮಾರ ಕಾರ್ಯಕ್ರಮ ನಿರೂಪಿಸಿದರು.

“ಸಾಂಪ್ರದಾಯಿಕ ಕಲೆ ಮತ್ತು ಕಲಾವಿದರನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಸಾಂಸ್ಕೃತಿಕ ಸಂಘಟನೆಗಳು ಹಾಗೂ ಕಲಾವಿದರು ಅವುಗಳ ಸದುಪಯೋಗ ಪಡೆದುಕೊಳ್ಳಬೇಕು.”

– ಡಾ. ಬಸವರಾಜ ಬಳ್ಳಾರಿ, ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ

ಒಣಗುತ್ತಿರುವ ಬೆಳೆಗಳ ಪರಿಶೀಲಿಸಿದ ಜಿಲ್ಲಾಧಿಕಾರಿ

0

ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲೆಯಲ್ಲಿ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ಬೆಳೆಗಳು ಬಾಡುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರು ಗುರುವಾರ ಗದಗ ಹಾಗೂ ರೋಣ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ರೈತರ ಹೊಲಗಳಲ್ಲೇ ಬೆಳೆಗಳ ಸ್ಥಿತಿಗತಿ ಪರಿಶೀಲಿಸಿದರು. ರೈತರೊಂದಿಗೆ ನೇರವಾಗಿ ಸಂವಾದ ನಡೆಸಿದ ಅವರು, ಆತಂಕ ಪಡಬಾರದು ಎಂದು ಧೈರ್ಯ ತುಂಬಿದರೆ, ಕೃಷಿ ಇಲಾಖೆ ಅಧಿಕಾರಿಗಳಿಗೆ ನಿರಂತರ ಬೆಳೆ ಮೇಲ್ವಿಚಾರಣೆ ನಡೆಸುವಂತೆ ಸೂಚನೆ ನೀಡಿದರು.

ಗದಗ ತಾಲೂಕಿನ ದುಂದೂರ ಕ್ರಾಸ್, ಗಂಗಿಮಡಿ–ಹಿರೇಹಂದಿಗೋಳ ರಸ್ತೆ, ಹರ್ಲಾಪೂರ ಹಾಗೂ ಕೋಟುಮುಚಗಿ ಗ್ರಾಮಗಳಲ್ಲಿ ಹೆಸರು, ಉದ್ದು, ಶೇಂಗಾ, ಮೆಕ್ಕೆಜೋಳ ಮತ್ತು ಹತ್ತಿ ಬೆಳೆಗಳ ಬೆಳವಣಿಗೆಯನ್ನು ಪರಿಶೀಲಿಸಿದ ಜಿಲ್ಲಾಧಿಕಾರಿಗಳು, ಬಳಿಕ ರೋಣ ತಾಲೂಕಿನ ನರೇಗಲ್ ಗ್ರಾಮದಲ್ಲಿ ಮಳೆ ಕೊರತೆಯಿಂದ ಒಣಗುತ್ತಿರುವ ಬೆಳೆಗಳನ್ನು ವೀಕ್ಷಿಸಿದರು.

ಹೊಲಗಳಲ್ಲೇ ರೈತರ ಸಮಸ್ಯೆ ಆಲಿಸಿದ ಜಿಲ್ಲಾಧಿಕಾರಿಗಳು, ಮಳೆ ಕೊರತೆಯಿಂದ ಉಂಟಾಗುತ್ತಿರುವ ಹಾನಿಯನ್ನು ದಾಖಲಿಸಿ ರೈತರಿಗೆ ತಕ್ಷಣ ತಾಂತ್ರಿಕ ಸಲಹೆ ಹಾಗೂ ಅಗತ್ಯ ನೆರವು ಒದಗಿಸುವಂತೆ ಕೃಷಿ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಹವಾಮಾನ ವೈಪರೀತ್ಯ, ಕೀಟ ಹಾಗೂ ರೋಗಬಾಧೆ ಕಂಡುಬಂದರೆ ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಪರಿಹಾರ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಕೃಷಿ ಜಂಟಿ ನಿರ್ದೇಶಕಿ ಚೇತನಾ ಪಾಟೀಲ ಮಾಹಿತಿ ನೀಡಿ, ಜಿಲ್ಲೆಯಲ್ಲಿ 3,13,719 ಹೆಕ್ಟೇರ್ ಬಿತ್ತನೆ ಗುರಿಯಲ್ಲಿ ಇದುವರೆಗೆ 2,57,401 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿದೆ. ಜೂನ್ 1ರಿಂದ ಜುಲೈ 16ರವರೆಗೆ 121.4 ಮಿ.ಮೀ. ವಾಡಿಕೆ ಮಳೆಯ ಬದಲಿಗೆ ಕೇವಲ 82.50 ಮಿ.ಮೀ. ಮಳೆಯಾಗಿದ್ದು, ಶೇ.32.04ರಷ್ಟು ಮಳೆ ಕೊರತೆ ದಾಖಲಾಗಿದೆ ಎಂದು ತಿಳಿಸಿದರು.

ಜುಲೈ 22ರವರೆಗೆ ಬೆಳೆ ವಿಮೆ ನೋಂದಣಿ ಅವಕಾಶ

ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ–ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಅಡಿಯಲ್ಲಿ ಹೆಸರು ಹಾಗೂ ಹತ್ತಿ ಬೆಳೆಗಳಿಗೆ ಜುಲೈ 22ರವರೆಗೆ ಬೆಳೆ ವಿಮೆ ನೋಂದಾಯಿಸಿಕೊಳ್ಳಲು ಅವಕಾಶವಿದೆ. ಅರ್ಹ ರೈತರು ಈ ಸೌಲಭ್ಯದ ಸದುಪಯೋಗ ಪಡೆಯುವಂತೆ ಜಿಲ್ಲಾಧಿಕಾರಿ ಮನವಿ ಮಾಡಿದರು.

“ರೈತರು ಯಾವುದೇ ರೀತಿಯ ಸಂಕಷ್ಟಕ್ಕೆ ಸಿಲುಕದಂತೆ ಅಧಿಕಾರಿಗಳು ನಿರಂತರವಾಗಿ ಹೊಲಗಳಿಗೆ ಭೇಟಿ ನೀಡಿ ಬೆಳೆಗಳ ಸ್ಥಿತಿಗತಿ ಪರಿಶೀಲಿಸಬೇಕು. ರೈತರಿಗೆ ಅಗತ್ಯ ತಾಂತ್ರಿಕ ಸಲಹೆ, ಇಲಾಖೆಯ ಸೌಲಭ್ಯ ಹಾಗೂ ಮಾರ್ಗದರ್ಶನವನ್ನು ಸಮಯಕ್ಕೆ ತಲುಪಿಸುವುದು ಅಧಿಕಾರಿಗಳ ಜವಾಬ್ದಾರಿಯಾಗಿದೆ.”

– ಸಿ.ಎನ್. ಶ್ರೀಧರ್, ಜಿಲ್ಲಾಧಿಕಾರಿ, ಗದಗ

ಬಿಡದಿ ಭೂಸ್ವಾಧೀನ ವಿವಾದ: ಸಿಎಂ ವಿರುದ್ಧ ವಿಜಯೇಂದ್ರ ತೀವ್ರ ವಾಗ್ದಾಳಿ

0

ವಿಜಯಸಾಕ್ಷಿ ಸುದ್ದಿ, ಗದಗ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಹುದ್ದೆಯ ಘನತೆಗೆ ತಕ್ಕಂತೆ ನಡೆದುಕೊಳ್ಳದೆ, ರಿಯಲ್ ಎಸ್ಟೇಟ್ ಏಜೆಂಟ್‌ನಂತೆ ವರ್ತಿಸುತ್ತಿದ್ದಾರೆ. ಬಿಡದಿಯಲ್ಲಿ ರೈತರ ಜಮೀನುಗಳನ್ನು ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವ ಮೂಲಕ ತಮ್ಮ ಹಿತಾಸಕ್ತಿಯನ್ನು ಕಾಪಾಡಿಕೊಳ್ಳಲು ಮುಂದಾಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತೀವ್ರ ವಾಗ್ದಾಳಿ ನಡೆಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರು ಸ್ವಯಂಪ್ರೇರಣೆಯಿಂದ ಭೂಮಿ ನೀಡಿದರೆ ಮಾತ್ರ ಭೂಸ್ವಾಧೀನ ಮಾಡಬೇಕು. ಆದರೆ, ಬಿಡದಿಯಲ್ಲಿ ರಾತ್ರಿ ವೇಳೆ ಗೂಂಡಾಗಳನ್ನು ರೈತರ ಮನೆಗಳಿಗೆ ಕಳುಹಿಸಿ ಬೆದರಿಕೆ ಹಾಕಲಾಗುತ್ತಿದೆ ಎಂದು ಆರೋಪಿಸಿದರು.

ಕನಕಪುರದಲ್ಲಿ ಎರಡನೇ ವಿಮಾನ ನಿಲ್ದಾಣ ನಿರ್ಮಾಣದ ಪ್ರಸ್ತಾಪವೂ ರಿಯಲ್ ಎಸ್ಟೇಟ್ ಲಾಬಿಯ ಭಾಗವಾಗಿದೆ. ತುಮಕೂರು ಅಥವಾ ಮಧ್ಯ ಕರ್ನಾಟಕ ಭಾಗದಲ್ಲಿ ವಿಮಾನ ನಿಲ್ದಾಣ ನಿರ್ಮಿಸಿದರೆ ರಾಜ್ಯದ ಬಹುತೇಕ ಜನರಿಗೆ ಅನುಕೂಲವಾಗಲಿದೆ. ಆದರೆ, ತಮ್ಮ ರಾಜಕೀಯ ಹಾಗೂ ವೈಯಕ್ತಿಕ ಹಿತಾಸಕ್ತಿಗಾಗಿ ಕನಕಪುರವನ್ನು ಆಯ್ಕೆ ಮಾಡಲಾಗುತ್ತಿದೆ ಎಂದು ಟೀಕಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಹಿಂದೂಗಳ ಮೇಲಿನ ದೌರ್ಜನ್ಯ, ಕೊಲೆ ಹಾಗೂ ಅಲ್ಪಸಂಖ್ಯಾತರ ಓಲೈಕೆ ರಾಜಕಾರಣ ಮಿತಿಮೀರಿದೆ ಎಂದು ಆರೋಪಿಸಿದ ಅವರು, ಹಾವೇರಿ, ರಟ್ಟಿಹಳ್ಳಿ, ಯಲ್ಲಾಪುರ ಹಾಗೂ ಕೊಪ್ಪಳದ ಘಟನೆಗಳನ್ನು ಉಲ್ಲೇಖಿಸಿ ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಹೇಳಿದರು.

ಎಸ್‌ಐಆರ್ (ವಿಶೇಷ ಸಮಗ್ರ ಪರಿಷ್ಕರಣೆ) ಕಾರ್ಯವನ್ನು ಬಿಜೆಪಿ ಸವಾಲಾಗಿ ಸ್ವೀಕರಿಸಿದ್ದು, ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಕಾರ್ಯಕರ್ತರು ಮನೆಮನೆಗೆ ತೆರಳಿ ಕೆಲಸ ಮಾಡುತ್ತಿದ್ದಾರೆ. ಇದೇ ವೇಳೆ ಅಕ್ರಮ ವಲಸಿಗರಿಗೆ ಪಿಆರ್‌ಸಿ ನೀಡುತ್ತಿರುವುದು ಖಂಡನೀಯ ಎಂದು ಹೇಳಿದರು.

ರಾಜ್ಯದಲ್ಲಿ ಭೀಕರ ಮಳೆ ಕೊರತೆಯಿಂದ ರೈತರು ಸಂಕಷ್ಟದಲ್ಲಿದ್ದರೂ ಕೃಷಿ ಸಚಿವರೇ ಇಲ್ಲದಿರುವುದು ಸರ್ಕಾರದ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ. ಪ್ರಧಾನಿಗೆ ಪತ್ರ ಬರೆದು ರಾಜಕೀಯ ಮಾಡುವ ಬದಲು ರೈತರಿಗೆ ತಕ್ಷಣ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿದರು.

ರಾಜ್ಯ ಸರ್ಕಾರದ ಜನವಿರೋಧಿ ಆಡಳಿತ, ರೈತ ವಿರೋಧಿ ನೀತಿ ಹಾಗೂ ಕಾನೂನು ಸುವ್ಯವಸ್ಥೆ ವೈಫಲ್ಯ ಖಂಡಿಸಿ ಜುಲೈ 17ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ವಿಜಯೇಂದ್ರ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ, ಬಿಜೆಪಿ ಜಿಲ್ಲಾಧ್ಯಕ್ಷ ರಾಜು ಕುರಡಗಿ, ಮುಖಂಡರಾದ ಶರಣು ತಳ್ಳಿಕೇರಿ, ಲಿಂಗರಾಜ ಪಾಟೀಲ, ಫಕ್ಕಿರೇಶ ರಟ್ಟಿಹಳ್ಳಿ, ಎಂ.ಎಸ್. ಕರಿಗೌಡ್ರ, ಎಂ.ಎಂ. ಹಿರೇಮಠ, ಭೀಮಸಿಂಗ್ ರಾಠೋಡ್, ಉಷಾ ದಾಸರ, ಸ್ವಾತಿ ಅಕ್ಕಿ, ನಿರ್ಮಲಾ ಕೊಳ್ಳಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

“ಗದಗ ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭೀಕರ ಬರಗಾಲದ ಪರಿಸ್ಥಿತಿ ನಿರ್ಮಾಣವಾಗಿದೆ. ಬಿತ್ತನೆ ಮಾಡಿದರೂ ಮೊಳಕೆ ಬರುತ್ತಿಲ್ಲ. ರೈತರ ರಕ್ಷಣೆಗೆ ಸರ್ಕಾರ ತಕ್ಷಣ ಧಾವಿಸಬೇಕು. ಪ್ರಧಾನಿಗೆ ಪತ್ರ ಬರೆದು ಕೈಕಟ್ಟಿ ಕುಳಿತರೆ ರೈತರ ಕಣ್ಣೀರು ಒರೆಸಲು ಸಾಧ್ಯವಿಲ್ಲ.”

– ಬಿ.ವೈ. ವಿಜಯೇಂದ್ರ, ರಾಜ್ಯಾಧ್ಯಕ್ಷ, ಬಿಜೆಪಿ