ತುಮಕೂರು: ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದ ಗುಬ್ಬಿ ಕ್ಷೇತ್ರದ ಶಾಸಕ ಎಸ್.ಆರ್. ಶ್ರೀನಿವಾಸ್, ತಮಗೆ ಸಚಿವ ಸ್ಥಾನ ಸಿಗುವುದೇ ಇಲ್ಲ ಎಂದು ಭಾವಿಸಿ ಮನೆಯಲ್ಲೇ ಕುಳಿತಿದ್ದ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸ್ವತಃ ಕರೆ ಮಾಡಿ ಸಚಿವರನ್ನಾಗಿ ಮಾಡಿದ್ದರು ಎಂದು ನೆನಪಿಸಿಕೊಂಡಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದೇವೇಗೌಡರು ಕುಂಚಿಟಿಗ ಸಮುದಾಯದ ಕೋಟಾದಲ್ಲಿ ಮತ್ತೊಬ್ಬರಿಗೆ ಸಚಿವ ಸ್ಥಾನ ನೀಡಲು ಯೋಚಿಸಿದ್ದರು. ಆದರೆ, ಎಚ್.ಡಿ. ಕುಮಾರಸ್ವಾಮಿ ತಮ್ಮನ್ನು ಕರೆದು ಸಚಿವ ಸ್ಥಾನ ನೀಡಿದ್ದರು ಎಂದು ಹೇಳುವ ಮೂಲಕ ಹೆಚ್ಡಿಕೆ ನಾಯಕತ್ವವನ್ನು ಪ್ರಶಂಸಿಸಿದರು.
ತಮ್ಮ ಮತ್ತು ಎಚ್.ಡಿ. ಕುಮಾರಸ್ವಾಮಿ ನಡುವೆ ಕೇವಲ ಒಂದು ವಿಚಾರದಲ್ಲಿ ಮಾತ್ರ ಭಿನ್ನಾಭಿಪ್ರಾಯ ಉಂಟಾಗಿತ್ತು. ಅದನ್ನು ಹೊರತುಪಡಿಸಿ ಅವರೊಂದಿಗೆ ಯಾವುದೇ ವೈಮನಸ್ಸು ಇರಲಿಲ್ಲ ಎಂದು ಶ್ರೀನಿವಾಸ್ ಸ್ಪಷ್ಟಪಡಿಸಿದರು.
ಸಚಿವ ಸ್ಥಾನ ದೊರೆಯದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ) ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ತೀರ್ಮಾನಿಸಿದ್ದೆ. ಆದರೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ವತಃ ಕರೆ ಮಾಡಿ ರಾಜೀನಾಮೆ ನೀಡಬೇಡಿ ಎಂದು ಮನವಿ ಮಾಡಿದರು ಎಂದು ಅವರು ತಿಳಿಸಿದರು.
ಮುಖ್ಯಮಂತ್ರಿಯವರು ನಾಲ್ಕೈದು ಬಾರಿ ಕರೆ ಮಾಡಿದ ಬಳಿಕ ಮಾತನಾಡಿ, ಎಲ್ಲ ನಿಗಮ-ಮಂಡಳಿಗಳ ಅಧ್ಯಕ್ಷರ ರಾಜೀನಾಮೆಯನ್ನು ಸಾಮೂಹಿಕವಾಗಿ ಪಡೆಯುವ ನಿರ್ಧಾರವಿದೆ ಎಂದು ತಿಳಿಸಿದರು. ಈ ಕಾರಣದಿಂದ ತಾವು ರಾಜೀನಾಮೆ ಸಲ್ಲಿಸಿಲ್ಲ ಎಂದು ಶ್ರೀನಿವಾಸ್ ಹೇಳಿದರು.
ಇದೇ ವೇಳೆ ಸಚಿವರಾದ ಚೆಲುವರಾಯಸ್ವಾಮಿ ಹಾಗೂ ಮಾಗಡಿ ಬಾಲಕೃಷ್ಣ ಕೂಡ ಕರೆ ಮಾಡಿ ಯಾವುದೇ ದುಡುಕಿನ ನಿರ್ಧಾರ ತೆಗೆದುಕೊಳ್ಳಬೇಡಿ ಎಂದು ಸಲಹೆ ನೀಡಿದ್ದರು ಎಂದು ಅವರು ಹೇಳಿದರು.
ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಅವಕಾಶ ನೀಡದಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದ ಶ್ರೀನಿವಾಸ್, 33 ಶೇಕಡಾ ಮಹಿಳಾ ಮೀಸಲಾತಿಯ ಬಗ್ಗೆ ಮಾತನಾಡುವ ಸರ್ಕಾರ ಮಹಿಳೆಯರಿಗೆ ಸಚಿವ ಸ್ಥಾನ ನೀಡದೇ ಇರುವುದು ಸರಿಯಲ್ಲ. ಇನ್ನೂ ಕಾಲ ಮಿಂಚಿಲ್ಲ. ಮುಖ್ಯಮಂತ್ರಿ ಅವರ ಬಳಿ ಇರುವ ಒಂದು ಇಲಾಖೆಯನ್ನು ಮಹಿಳಾ ಶಾಸಕರಿಗೆ ನೀಡಬೇಕು ಎಂದು ಆಗ್ರಹಿಸಿದರು.

