ಕಲಬುರಗಿ: ಗುತ್ತಿಗೆ ಕಾಮಗಾರಿಯ ಬಾಕಿ ಹಣ ಕೇಳಿದ ಹಿನ್ನೆಲೆ ಕಾಂಗ್ರೆಸ್ ಮುಖಂಡನಿಂದ ನಿರಂತರ ಬೆದರಿಕೆ ಮತ್ತು ಕಿರುಕುಳಕ್ಕೆ ಒಳಗಾದ ಆರೋಪದ ನಡುವೆ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ರಟಕಲ್ ಗ್ರಾಮದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಅರವಿಂದ್ ಚವ್ಹಾಣ್ ಹಾಗೂ ಅವರ ಅಳಿಯ ಅಮಿತ್ ರಾಠೋಡ್ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಪ್ರಕರಣ ರಾಜಕೀಯ ವಲಯದಲ್ಲೂ ಸಂಚಲನ ಮೂಡಿಸಿದೆ.
ಮೃತರನ್ನು ರಟಕಲ್ ಗ್ರಾಮದ ನಿವಾಸಿ ಖದೀರ್ ಪಾಷಾ (38) ಎಂದು ಗುರುತಿಸಲಾಗಿದೆ. ಸೇಡಂನ ಸಿಮೆಂಟ್ ಕಾರ್ಖಾನೆಯ ಕಾಮಗಾರಿಯನ್ನು ಗುತ್ತಿಗೆ ಪಡೆದಿದ್ದ ಅರವಿಂದ್ ಚವ್ಹಾಣ್, ಕಾಮಗಾರಿಗೆ ಖದೀರ್ ಪಾಷಾರನ್ನು ಕೂಲಿಗಾಗಿ ನೇಮಿಸಿಕೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಕಾಮಗಾರಿ ಪೂರ್ಣಗೊಂಡ ಬಳಿಕ ಬಾಕಿ ಹಣ ನೀಡುವಂತೆ ಖದೀರ್ ಪಾಷಾ ಕೇಳಿದಾಗ, ಅರವಿಂದ್ ಚವ್ಹಾಣ್ ಹಾಗೂ ಅಮಿತ್ ರಾಠೋಡ್ ಅವರು ಬೆದರಿಕೆ ಹಾಕಿ ಮಾನಸಿಕ ಕಿರುಕುಳ ನೀಡಿದರು ಎಂಬ ಆರೋಪ ಕೇಳಿಬಂದಿದೆ. ಈ ಒತ್ತಡದಿಂದ ಮನನೊಂದ ಖದೀರ್ ಪಾಷಾ ರಟಕಲ್ ಗ್ರಾಮದ ಜಮೀನಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬದವರು ದೂರಿದ್ದಾರೆ.
ಮೃತನ ಪತ್ನಿ ಅನೀಸಾ ಬೇಗಂ ನೀಡಿದ ದೂರಿನ ಆಧಾರದ ಮೇಲೆ ಕಾಳಗಿ ಪೊಲೀಸ್ ಠಾಣೆಯಲ್ಲಿ ಅರವಿಂದ್ ಚವ್ಹಾಣ್ ಹಾಗೂ ಅಮಿತ್ ರಾಠೋಡ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಆರೋಪಗಳ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದು, ಆತ್ಮಹತ್ಯೆಗೆ ಪ್ರಚೋದನೆ ಸೇರಿದಂತೆ ವಿವಿಧ ಆಯಾಮಗಳಲ್ಲಿ ವಿಚಾರಣೆ ಮುಂದುವರಿದಿದೆ.
ಪ್ರಕರಣದ ಮತ್ತೊಂದು ಪ್ರಮುಖ ಅಂಶವೆಂದರೆ, ಆರೋಪಿ ಅರವಿಂದ್ ಚವ್ಹಾಣ್ ಅವರು 2028ರ ಕಲಬುರಗಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿರುವುದು. ಪ್ರಕರಣದ ತನಿಖೆ ಯಾವ ದಿಕ್ಕಿನಲ್ಲಿ ಸಾಗಲಿದೆ ಎಂಬುದರ ಮೇಲೆ ಎಲ್ಲರ ಗಮನ ನೆಟ್ಟಿದೆ.

