Home Blog

ಆಂಬುಲೆನ್ಸ್ʼಗೆ ದಾರಿ ಬಿಡದೆ ವೀಲಿಂಗ್: ಆರು ಅಪ್ರಾಪ್ತರು ಪೊಲೀಸರ ವಶಕ್ಕೆ

ಬೆಂಗಳೂರು: ಆಂಬುಲೆನ್ಸ್‌ಗೆ ದಾರಿ ಬಿಡದೆ ನಡುರಸ್ತೆಯಲ್ಲೇ ವೀಲಿಂಗ್ ಮಾಡಿ ವಾಹನ ಸಂಚಾರಕ್ಕೆ ಅಡ್ಡಿಪಡಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಯಶವಂತಪುರ ಸಂಚಾರಿ ಪೊಲೀಸರು ಆರು ಅಪ್ರಾಪ್ತರನ್ನು ವಶಕ್ಕೆ ಪಡೆದು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

ಜುಲೈ 4ರ ಮಧ್ಯರಾತ್ರಿ ನಡೆದ ಘಟನೆಯಲ್ಲಿ ಕೆಲ ಯುವಕರು ರಸ್ತೆಯ ಮಧ್ಯಭಾಗದಲ್ಲಿ ಅಪಾಯಕಾರಿ ರೀತಿಯಲ್ಲಿ ವೀಲಿಂಗ್ ಮಾಡುತ್ತಾ ಅಂಬುಲೆನ್ಸ್ ಸೇರಿದಂತೆ ಇತರೆ ವಾಹನಗಳ ಸಂಚಾರಕ್ಕೆ ಅಡ್ಡಿಯಾಗಿದ್ದರು. ಈ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.

ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಯಶವಂತಪುರ ಸಂಚಾರಿ ಪೊಲೀಸರು ಸಿಸಿಟಿವಿ ದೃಶ್ಯಗಳು ಹಾಗೂ ಇತರೆ ಮಾಹಿತಿಗಳ ಆಧಾರದಲ್ಲಿ ತನಿಖೆ ನಡೆಸಿ, ವೀಲಿಂಗ್‌ನಲ್ಲಿ ಭಾಗಿಯಾಗಿದ್ದ ಆರು ಅಪ್ರಾಪ್ತರನ್ನು ಗುರುತಿಸಿ ವಶಕ್ಕೆ ಪಡೆದಿದ್ದಾರೆ.

ಈ ಸಂಬಂಧ ಯಶವಂತಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಈಗಾಗಲೇ ಎಫ್‌ಐಆರ್ ದಾಖಲಾಗಿದ್ದು, ಪ್ರಕರಣದ ಕುರಿತು ಮುಂದಿನ ತನಿಖೆ ಮತ್ತು ಕಾನೂನು ಕ್ರಮ ಮುಂದುವರಿದಿದೆ.

ಕಮಲ್ ಹಾಸನ್ ವಿರುದ್ಧ ಕನ್ನಡ ಭಾಷೆ ವಿವಾದ: ವಿಶೇಷ ನ್ಯಾಯಾಲಯಕ್ಕೆ ಪ್ರಕರಣ ವರ್ಗಾವಣೆ

ಬೆಂಗಳೂರು: ಕನ್ನಡ ಭಾಷೆ ಕುರಿತು ನಟ ಹಾಗೂ ರಾಜ್ಯಸಭಾ ಸದಸ್ಯ ಕಮಲ್ ಹಾಸನ್ ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ದಾಖಲಾಗಿದ್ದ ಖಾಸಗಿ ದೂರನ್ನು ಬೆಂಗಳೂರಿನ 42ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಲಾಗಿದೆ.

2025ರ ಮೇ ತಿಂಗಳಲ್ಲಿ ‘ಥಗ್ ಲೈಫ್’ ಚಿತ್ರದ ಆಡಿಯೋ ಬಿಡುಗಡೆ ಕಾರ್ಯಕ್ರಮದಲ್ಲಿ ಕಮಲ್ ಹಾಸನ್, “ತಮಿಳು ಭಾಷೆಯೇ ಕನ್ನಡ ಭಾಷೆಯ ತಾಯಿ” ಎಂಬ ಅರ್ಥದಲ್ಲಿ ಹೇಳಿಕೆ ನೀಡಿದ್ದರು. ಈ ಹೇಳಿಕೆ ಕರ್ನಾಟಕದಲ್ಲಿ ವ್ಯಾಪಕ ವಿವಾದಕ್ಕೆ ಕಾರಣವಾಗಿದ್ದು, ವಿವಿಧ ಕನ್ನಡಪರ ಸಂಘಟನೆಗಳು ಮತ್ತು ಸಾರ್ವಜನಿಕರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು.

ಈ ಸಂಬಂಧ ಆರಂಭದಲ್ಲಿ ಕನಕಪುರ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಲಾಗಿತ್ತು. ಆದರೆ ಇತ್ತೀಚೆಗೆ ಕಮಲ್ ಹಾಸನ್ ತಮಿಳುನಾಡಿನಿಂದ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ,

ಜನಪ್ರತಿನಿಧಿಗಳ ವಿರುದ್ಧದ ಪ್ರಕರಣಗಳ ವಿಚಾರಣೆ ನಡೆಸುವ ಬೆಂಗಳೂರಿನ 42ನೇ ವಿಶೇಷ ನ್ಯಾಯಾಲಯಕ್ಕೆ ಪ್ರಕರಣವನ್ನು ವರ್ಗಾವಣೆ ಮಾಡಲಾಗಿದೆ. ಪ್ರಕರಣದ ಪ್ರಾಥಮಿಕ ವಿಚಾರಣೆ ನಡೆಸಿದ ನ್ಯಾಯಾಲಯ, ಮುಂದಿನ ವಿಚಾರಣೆಯನ್ನು ಜುಲೈ 22ಕ್ಕೆ ನಿಗದಿಪಡಿಸಿ ಮುಂದೂಡಿದೆ.

ಕರಾಚಿ ಕರಾವಳಿ ಬಳಿ ಪಾಕಿಸ್ತಾನದ ಕಾರ್ಗೋ ವಿಮಾನ ನಿಗೂಢವಾಗಿ ನಾಪತ್ತೆ!

ಇಸ್ಲಾಮಾಬಾದ್: ಪಾಕಿಸ್ತಾನದ ಕರಾಚಿ ಕರಾವಳಿಯ ಸಮೀಪ ಅರಬ್ಬಿ ಸಮುದ್ರದ ಮೇಲೆ ಹಾರಾಟ ನಡೆಸುತ್ತಿದ್ದ ಕಾರ್ಗೋ ವಿಮಾನವೊಂದು ನಿಗೂಢವಾಗಿ ನಾಪತ್ತೆಯಾಗಿದ್ದು, ಪಾಕಿಸ್ತಾನ ನೌಕಾಪಡೆ ಹಾಗೂ ರಕ್ಷಣಾ ಸಂಸ್ಥೆಗಳು ಸಮುದ್ರದಲ್ಲಿ ವ್ಯಾಪಕ ಶೋಧ ಕಾರ್ಯಾಚರಣೆ ಆರಂಭಿಸಿವೆ.

ಐವರು ಸಿಬ್ಬಂದಿಯನ್ನು ಹೊತ್ತಿದ್ದ ಬೋಯಿಂಗ್ 737 ಕಾರ್ಗೋ ವಿಮಾನವು ಮಂಗಳವಾರ ರಾತ್ರಿ ಯುಎಇಯ ಶಾರ್ಜಾದಿಂದ ಟೇಕ್‌ಆಫ್ ಆಗಿತ್ತು. ಸುಮಾರು ಎರಡು ಗಂಟೆಗಳ ಹಾರಾಟದ ಬಳಿಕ ಕರಾಚಿ ಕರಾವಳಿ ಸಮೀಪ ರೇಡಾರ್ ಸಂಪರ್ಕ ಕಳೆದುಕೊಂಡಿದ್ದು, ಬಳಿಕ ವಿಮಾನದ ಯಾವುದೇ ಸುಳಿವು ಸಿಕ್ಕಿಲ್ಲ.

ಸ್ಥಳೀಯ ಸಮಯ ರಾತ್ರಿ 9:18ರ ಸುಮಾರಿಗೆ ವಿಮಾನದಲ್ಲಿ ನ್ಯಾವಿಗೇಷನ್ ವ್ಯವಸ್ಥೆಯಲ್ಲಿ ತಾಂತ್ರಿಕ ಸಮಸ್ಯೆ ಉಂಟಾಗಿದೆ ಎಂದು ಪೈಲಟ್ ಮಾಹಿತಿ ನೀಡಿದ್ದು, ಕರಾಚಿ ಏರ್ ಟ್ರಾಫಿಕ್ ಕಂಟ್ರೋಲ್ ಕೇಂದ್ರದಿಂದ ಮಾರ್ಗದರ್ಶನ ಪಡೆಯಲಾಗಿತ್ತು. ಆದರೆ ಸಂಪರ್ಕ ಕಡಿತಗೊಳ್ಳುವ ಮುನ್ನ ಯಾವುದೇ ತುರ್ತು ಸಂದೇಶ ಅಥವಾ ಅಪಾಯದ ಸಂಕೇತವನ್ನು ವಿಮಾನದಿಂದ ರವಾನಿಸಲಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಂತ್ರಿಕ ದೋಷ ಅಥವಾ ಪ್ರತಿಕೂಲ ಹವಾಮಾನದಿಂದ ಈ ಘಟನೆ ಸಂಭವಿಸಿರಬಹುದು ಎಂದು ಶಂಕಿಸಲಾಗಿದ್ದು, ವಿಮಾನ ಅರಬ್ಬಿ ಸಮುದ್ರದಲ್ಲೇ ಪತನಗೊಂಡಿರುವ ಸಾಧ್ಯತೆಯನ್ನೂ ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.

ವಿಮಾನ ಕೊನೆಯದಾಗಿ ಕಾಣಿಸಿಕೊಂಡ ಪ್ರದೇಶದಲ್ಲಿ ಪಾಕಿಸ್ತಾನ ನೌಕಾಪಡೆ, ಕರಾವಳಿ ಕಾವಲು ಪಡೆ ಹಾಗೂ ಹೆಲಿಕಾಪ್ಟರ್‌ಗಳ ಮೂಲಕ ಶೋಧ ಕಾರ್ಯಾಚರಣೆ ಮುಂದುವರಿದಿದೆ. ಸಮುದ್ರದಲ್ಲಿ ಬಿರುಗಾಳಿ ಮತ್ತು ಎತ್ತರದ ಅಲೆಗಳು ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗಿವೆ.

ವಿಮಾನದಲ್ಲಿದ್ದ ಸರಕುಗಳ ವಿವರವನ್ನು ಸದ್ಯಕ್ಕೆ ಅಧಿಕಾರಿಗಳು ಬಹಿರಂಗಪಡಿಸಿಲ್ಲ. ವಿಮಾನದ ಪತ್ತೆ ಹಾಗೂ ಘಟನೆಯ ನಿಖರ ಕಾರಣ ತಿಳಿಯಲು ತನಿಖೆ ಮುಂದುವರೆದಿದೆ.

ಅಕ್ರಮ ಆಸ್ತಿ ಆರೋಪ: 7 ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ

ಬೆಂಗಳೂರು: ಆದಾಯಕ್ಕಿಂತಲೂ ಅಧಿಕ ಆಸ್ತಿ ಗಳಿಕೆ ಆರೋಪದಡಿ ರಾಜ್ಯದ ವಿವಿಧ ಜಿಲ್ಲೆಗಳ ಸರ್ಕಾರಿ ಅಧಿಕಾರಿಗಳಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.

ಬೆಂಗಳೂರು, ಬೆಂಗಳೂರು ದಕ್ಷಿಣ, ಚಿತ್ರದುರ್ಗ, ರಾಯಚೂರು, ಕಲಬುರಗಿ, ತುಮಕೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಒಟ್ಟು 10 ಸ್ಥಳಗಳಲ್ಲಿ ಶೋಧ ಕಾರ್ಯ ನಡೆಯುತ್ತಿದ್ದು, ದಾಖಲೆಗಳ ಪರಿಶೀಲನೆ ಮುಂದುವರೆದಿದೆ.

ಲೋಕಾಯುಕ್ತ ಅಧಿಕಾರಿಗಳ ಪ್ರಕಾರ, ಅಸಮತೋಲಿತ ಆಸ್ತಿ ಹಾಗೂ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಸಂಗ್ರಹಿಸಿರುವ ಆರೋಪಗಳ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಈ ಕಾರ್ಯಾಚರಣೆ ಕೈಗೊಳ್ಳಲಾಗಿದೆ.

ದಾಳಿ ನಡೆದ ಅಧಿಕಾರಿಗಳ ವಿವರ:

  • ಬಸನಗೌಡ ಪಾಟೀಲ್ – ಎಕ್ಸಿಕ್ಯುಟಿವ್ ಇಂಜಿನಿಯರ್, ಕೃಷ್ಣಾ ಭಾಗ್ಯ ಜಲನಿಗಮ, ನಾರಾಯಣಪುರ ಬಲದಂಡೆ ಕಾಲುವೆ ವಿಭಾಗ-4, ರಾಯಚೂರು
  • ಶಂಕರ್ ಎಂ. – ಸಹಾಯಕ ಪ್ರಾಧ್ಯಾಪಕ, ಕೃಷಿ ಎಂಜಿನಿಯರಿಂಗ್ ವಿಭಾಗ, ತೋಟಗಾರಿಕೆ ವಿಶ್ವವಿದ್ಯಾಲಯ, ಚಿತ್ರದುರ್ಗ
  • ದುಗ್ಗಪ್ಪ ಬಿ.ಎಚ್. – ವಲಯ ಅರಣ್ಯಾಧಿಕಾರಿ, ಜಲಾನಯನ ಅಭಿವೃದ್ಧಿ ಇಲಾಖೆ, ಚಿತ್ರದುರ್ಗ
  • ನರೇಂದ್ರ ಕುಮಾರ್ – ಎಕ್ಸಿಕ್ಯುಟಿವ್ ಇಂಜಿನಿಯರ್, ಲೋಕೋಪಯೋಗಿ ಇಲಾಖೆ, ಬೆಂಗಳೂರು
  • ಪ್ರವೀಣ್ ಬಿ. ಶ್ರೀಹರಿ – ಸೂಪರಿಂಟೆಂಡೆಂಟ್ ಇಂಜಿನಿಯರ್, ಕರ್ನಾಟಕ ಗ್ರಾಮೀಣಾಭಿವೃದ್ಧಿ ಇಲಾಖೆ, ಬೆಂಗಳೂರು
  • ಪುಷ್ಪ ಡಿ.ಆರ್. – ಉಪ ನಿರ್ದೇಶಕಿ (ಆಡಳಿತ), ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ), ಬೆಂಗಳೂರು
  • ಮಧುಸೂಧನ್ ಎನ್. – ಸಹಾಯಕ ಇಂಜಿನಿಯರ್, ಸಣ್ಣ ನೀರಾವರಿ ಇಲಾಖೆ, ತುಮಕೂರು
  • ತಿಮ್ಮೇಗೌಡ – ಪಿಡಿಒ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಬೆಂಗಳೂರು ದಕ್ಷಿಣ
  • ಕಿರಣ್ ಅಂಗಡಿ – ಸಹಾಯಕ ಅರಣ್ಯ ಪರಿವರ್ತಕ, ಸಂಶೋಧನಾ ವಿಭಾಗ, ಶಿವಮೊಗ್ಗ
  • ಅಮೃತ್ ರಾವ್ – ಸಹಾಯಕ ಇಂಜಿನಿಯರ್, ಜೆಸ್ಕಾಂ, ಕಲಬುರಗಿ

ಬೆಳಗ್ಗಿನಿಂದಲೇ ಅಧಿಕಾರಿಗಳ ನಿವಾಸ, ಕಚೇರಿ ಹಾಗೂ ಸಂಬಂಧಿತ ಸ್ಥಳಗಳಲ್ಲಿ ದಾಖಲೆಗಳು, ಆಸ್ತಿ ವಿವರಗಳು ಮತ್ತು ಹಣಕಾಸು ವ್ಯವಹಾರಗಳಿಗೆ ಸಂಬಂಧಿಸಿದ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ. ತನಿಖೆ ಪೂರ್ಣಗೊಂಡ ಬಳಿಕ ಹೆಚ್ಚಿನ ಮಾಹಿತಿ ಬಹಿರಂಗವಾಗುವ ಸಾಧ್ಯತೆ ಇದೆ.

ಪ್ರಿಯಕರನ ಜೊತೆ ಸೇರಿ ಊಟದಲ್ಲಿ ನಿದ್ರೆ ಮಾತ್ರೆ ಬೆರೆಸಿ ಪತಿ ಹತ್ಯೆ: ಪತ್ನಿ ಸೇರಿ ಇಬ್ಬರಿಗೆ ಜೀವಾವಧಿ ಶಿಕ್ಷೆ

ಬೆಂಗಳೂರು: ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಸಂಚು ರೂಪಿಸಿ ಹತ್ಯೆ ಮಾಡಿದ ಪ್ರಕರಣದಲ್ಲಿ ಪತ್ನಿ ಹಾಗೂ ಆಕೆಯ ಪ್ರಿಯಕರನಿಗೆ ನಗರದ 67ನೇ ಸಿಸಿಹೆಚ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಜೊತೆಗೆ ಇಬ್ಬರಿಗೂ ತಲಾ ₹25 ಸಾವಿರ ದಂಡ ವಿಧಿಸಲಾಗಿದ್ದು, ದಂಡ ಪಾವತಿಸಲು ವಿಫಲರಾದರೆ ಒಂದು ವರ್ಷದ ಸಾದಾ ಶಿಕ್ಷೆ ಅನುಭವಿಸುವಂತೆ ನ್ಯಾಯಾಲಯ ಆದೇಶಿಸಿದೆ.

2017ರಲ್ಲಿ ನಡೆದಿದ್ದ ಸತೀಶ್ ಹತ್ಯೆ ಪ್ರಕರಣದಲ್ಲಿ ಪತ್ನಿ ಕಲ್ಪನಾ ಹಾಗೂ ಆಕೆಯ ಪ್ರಿಯಕರ ಜಾವೇದ್ ಪಾಷಾ ವಿರುದ್ಧ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ್ದ ಅಂದಿನ ಇನ್ಸ್‌ಪೆಕ್ಟರ್ ವೈ. ಮುದ್ದುರಾಜ್ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ವೇಳೆ ಸಾಕ್ಷ್ಯಾಧಾರಗಳು, ತಾಂತ್ರಿಕ ಮಾಹಿತಿ ಹಾಗೂ ವೈದ್ಯಕೀಯ ವರದಿಗಳ ಆಧಾರದ ಮೇಲೆ ಆರೋಪಿಗಳು ಅಪರಾಧ ಎಸಗಿರುವುದು ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಮೂರ್ತಿ ಎ. ಜಯಪ್ರಕಾಶ್ ಅವರು ಇಬ್ಬರಿಗೂ ಜೀವಾವಧಿ ಶಿಕ್ಷೆ ಪ್ರಕಟಿಸಿದರು.

ಪ್ರಕರಣದ ಹಿನ್ನೆಲೆ

ಯಶವಂತಪುರದ ಕೆ.ಎನ್. ಬಡಾವಣೆಯಲ್ಲಿ ವಾಸಿಸುತ್ತಿದ್ದ ಸತೀಶ್ ಅವರಿಗೆ ತಿಳಿಯದಂತೆ ಪತ್ನಿ ಕಲ್ಪನಾ ಜಾವೇದ್ ಪಾಷಾ ಎಂಬಾತನೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಳು. 2017ರ ಏಪ್ರಿಲ್ 18ರಂದು ಮನೆ ಬಿಟ್ಟು ಪ್ರಿಯಕರನೊಂದಿಗೆ ತೆರಳಿದ್ದ ಕಲ್ಪನಾ ನಾಪತ್ತೆಯಾಗಿರುವ ಬಗ್ಗೆ ಸತೀಶ್ ಪೊಲೀಸರಿಗೆ ದೂರು ನೀಡಿದ್ದರು.

ನಂತರ ತಮ್ಮ ಸಂಬಂಧಕ್ಕೆ ಪತಿಯೇ ಅಡ್ಡಿಯಾಗಿದ್ದಾನೆ ಎಂದು ಭಾವಿಸಿದ ಕಲ್ಪನಾ ಮತ್ತು ಜಾವೇದ್, ಸತೀಶ್ ಹತ್ಯೆಗೆ ಸಂಚು ರೂಪಿಸಿದ್ದರು. ಮೇ 22ರಂದು ಕಲ್ಪನಾ ಊಟದಲ್ಲಿ ನಿದ್ರೆ ಮಾತ್ರೆ ಬೆರೆಸಿ ಪತಿಗೆ ನೀಡಿದ್ದಳು. ಸತೀಶ್ ನಿದ್ರೆಗೆ ಜಾರಿದ ಬಳಿಕ ಮನೆಗೆ ಬಂದ ಜಾವೇದ್ ಜೊತೆ ಸೇರಿ, ಚೂಡಿದಾರ್ ಬಟ್ಟೆಯಿಂದ ಕುತ್ತಿಗೆ ಬಿಗಿದು, ಬಾಯಿಗೆ ಬಟ್ಟೆ ತುರುಕಿ, ಕಲ್ಲಿನಿಂದ ಹಲ್ಲೆ ನಡೆಸಿ ಹತ್ಯೆ ಮಾಡಿದ್ದರು.

ಬಳಿಕ ಸತೀಶ್ ವಿಷ ಸೇವಿಸಿ ಮೃತಪಟ್ಟಂತೆ ನಾಟಕವಾಡಿ ಪ್ರಕರಣವನ್ನು ದಿಕ್ಕು ತಪ್ಪಿಸಲು ಯತ್ನಿಸಿದ್ದರು. ತಮ್ಮ ಮೇಲೆ ಅನುಮಾನ ಬಾರದಂತೆ ಕೃತ್ಯಕ್ಕೆ ಬಳಸಿದ್ದ ಸಿಮ್ ಕಾರ್ಡ್ ಅನ್ನು ಮುರಿದು ನಾಶಪಡಿಸಿದ್ದರೂ, ತನಿಖೆಯಲ್ಲಿ ದೊರೆತ ಸಾಕ್ಷ್ಯಗಳು ಹಾಗೂ ವೈದ್ಯಕೀಯ ವರದಿ ಆರೋಪಿಗಳ ವಿರುದ್ಧ ಬಲವಾದ ಪುರಾವೆಯಾಗಿ ಪರಿಣಮಿಸಿತು. ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕ ಕೆ.ವಿ. ಅಶ್ವಥನಾರಾಯಣ ಅವರು ಸರ್ಕಾರದ ಪರ ವಾದ ಮಂಡಿಸಿದ್ದರು.

ಚಿನ್ನಕ್ಕಿಂತ ಬೆಳ್ಳಿ ಧರಿಸಿದರೆ ಅದೃಷ್ಟ ಹೆಚ್ಚುತ್ತಾ? ಈ ರಾಶಿಯವರಿಗೆ ವಿಶೇಷ ಫಲ!

ಇತ್ತೀಚಿನ ದಿನಗಳಲ್ಲಿ ಬೆಳ್ಳಿಯ ಬೆಲೆಯೂ ಹೆಚ್ಚಾಗುತ್ತಿದ್ದು, ಚಿನ್ನದಷ್ಟೇ ಬೆಳ್ಳಿಗೂ ಬೇಡಿಕೆ ಹೆಚ್ಚಾಗಿದೆ. ಆಭರಣದ ಜೊತೆಗೆ ಆಧ್ಯಾತ್ಮಿಕ ಹಾಗೂ ಜ್ಯೋತಿಷ್ಯದ ದೃಷ್ಟಿಯಿಂದಲೂ ಬೆಳ್ಳಿಗೆ ವಿಶೇಷ ಮಹತ್ವವಿದೆ ಎಂದು ನಂಬಲಾಗಿದೆ.

ಜ್ಯೋತಿಷ್ಯದ ಪ್ರಕಾರ, ಕೆಲವು ರಾಶಿಯವರಿಗೆ ಬೆಳ್ಳಿ ಧರಿಸುವುದು ಶುಭಕರವಾಗಿದ್ದು, ಇದರಿಂದ ಮನಸ್ಸಿನ ಶಾಂತಿ, ಆರ್ಥಿಕ ಸ್ಥಿರತೆ ಹಾಗೂ ಜೀವನದಲ್ಲಿ ಸಮೃದ್ಧಿ ಹೆಚ್ಚುತ್ತದೆ ಎಂಬ ನಂಬಿಕೆ ಇದೆ.

ಕರ್ಕಾಟಕ ರಾಶಿ:
ಕರ್ಕಾಟಕ ರಾಶಿಯ ಅಧಿಪತಿ ಚಂದ್ರ. ಬೆಳ್ಳಿಗೂ ಚಂದ್ರನಿಗೂ ಸಂಬಂಧವಿದೆ ಎಂದು ಜ್ಯೋತಿಷ್ಯದಲ್ಲಿ ಹೇಳಲಾಗುತ್ತದೆ. ಈ ರಾಶಿಯವರು ಬೆಳ್ಳಿ ಧರಿಸುವುದರಿಂದ ಮಾನಸಿಕ ನೆಮ್ಮದಿ ಹಾಗೂ ಕುಟುಂಬದಲ್ಲಿ ಸಂತೋಷ ಹೆಚ್ಚುತ್ತದೆ ಎಂದು ನಂಬಲಾಗಿದೆ.

ವೃಷಭ ರಾಶಿ:
ವೃಷಭ ರಾಶಿಯ ಅಧಿಪತಿ ಶುಕ್ರ. ಸಂಪತ್ತು ಮತ್ತು ಐಶ್ವರ್ಯದ ಸಂಕೇತವಾದ ಶುಕ್ರನ ಪ್ರಭಾವದಿಂದ ಈ ರಾಶಿಯವರು ಬೆಳ್ಳಿ ಧರಿಸುವುದು ಆರ್ಥಿಕ ಸ್ಥಿರತೆ ಮತ್ತು ಅದೃಷ್ಟಕ್ಕೆ ಅನುಕೂಲಕರ ಎಂದು ಹೇಳಲಾಗುತ್ತದೆ.

ಮೀನ ರಾಶಿ:
ಮೀನ ರಾಶಿಯವರು ಬೆಳ್ಳಿ ಧರಿಸಿದರೆ ಮನಸ್ಸಿನ ಸ್ಥಿರತೆ, ಆತ್ಮವಿಶ್ವಾಸ ಹಾಗೂ ಸಕಾರಾತ್ಮಕ ಚಿಂತನೆ ಹೆಚ್ಚುತ್ತದೆ ಎಂಬ ನಂಬಿಕೆ ಇದೆ.

ವೃಶ್ಚಿಕ ರಾಶಿ:
ವೃಶ್ಚಿಕ ರಾಶಿಯವರು ಬೆಳ್ಳಿಯ ಉಂಗುರ, ಸರ ಅಥವಾ ಇತರೆ ಆಭರಣಗಳನ್ನು ಧರಿಸುವುದು ಶುಭಕರ ಎಂದು ಪರಿಗಣಿಸಲಾಗುತ್ತದೆ. ಇದರಿಂದ ಮಾನಸಿಕ ಒತ್ತಡ ಕಡಿಮೆಯಾಗಿ ಶಾಂತಿ ದೊರೆಯುತ್ತದೆ ಎಂದು ಜ್ಯೋತಿಷ್ಯದಲ್ಲಿ ಉಲ್ಲೇಖಿಸಲಾಗಿದೆ.

ತುಲಾ ರಾಶಿ:
ತುಲಾ ರಾಶಿಯ ಅಧಿಪತಿಯೂ ಶುಕ್ರನಾಗಿದ್ದು, ಬೆಳ್ಳಿ ಧರಿಸುವುದರಿಂದ ಜೀವನದಲ್ಲಿ ಸಮತೋಲನ, ಶಾಂತಿ ಹಾಗೂ ಸಂತೋಷ ಹೆಚ್ಚುತ್ತದೆ ಎಂಬ ನಂಬಿಕೆಯಿದೆ.

ಬೆಳ್ಳಿ ಧರಿಸುವುದರಿಂದ ಆಗುವ ಪ್ರಯೋಜನಗಳು:

  • ಮನಸ್ಸಿನ ಶಾಂತಿ ಹೆಚ್ಚುತ್ತದೆ.
  • ಕೋಪ ಮತ್ತು ಆತಂಕ ಕಡಿಮೆಯಾಗುತ್ತದೆ.
  • ಏಕಾಗ್ರತೆ ಸುಧಾರಿಸುತ್ತದೆ.
  • ಭಾವನೆಗಳಲ್ಲಿ ಸಮತೋಲನ ಉಂಟಾಗುತ್ತದೆ.
  • ದೇಹದ ಉಷ್ಣತೆ ಸಮತೋಲನದಲ್ಲಿರಲು ಸಹಾಯವಾಗುತ್ತದೆ ಎಂದು ನಂಬಲಾಗಿದೆ.

 

ಹೊಸ ಮದ್ಯ ತೆರಿಗೆ ನೀತಿ ಎಫೆಕ್ಟ್; ರಾಜ್ಯದ ಅಬಕಾರಿ ಆದಾಯದಲ್ಲಿ ಭಾರೀ ಏರಿಕೆ!

ಬೆಂಗಳೂರು: ರಾಜ್ಯ ಸರ್ಕಾರ ಜಾರಿಗೆ ತಂದಿರುವ ನೂತನ ‘ಆಲ್ಕೋಹಾಲ್ ಇನ್ ಬಿವರೇಜ್’ ತೆರಿಗೆ ನೀತಿಯಿಂದ ಅಬಕಾರಿ ಇಲಾಖೆಯ ಆದಾಯದಲ್ಲಿ ಗಣನೀಯ ಏರಿಕೆಯಾಗಿದೆ.

ಮೇ 11ರಿಂದ ಜಾರಿಗೆ ಬಂದಿರುವ ಈ ನೀತಿಯಡಿ ಆಲ್ಕೋಹಾಲ್ ಪ್ರಮಾಣಕ್ಕೆ ಅನುಗುಣವಾಗಿ ತೆರಿಗೆ ವಿಧಿಸಲಾಗುತ್ತಿದ್ದು, ಇದರ ಪರಿಣಾಮವಾಗಿ ಗ್ರಾಹಕರ ಮದ್ಯ ಖರೀದಿ ಶೈಲಿಯಲ್ಲೂ ಬದಲಾವಣೆ ಕಂಡುಬಂದಿದೆ. ಹಾರ್ಡ್ ಲಿಕ್ಕರ್‌ಗಿಂತ ಕಡಿಮೆ ಆಲ್ಕೋಹಾಲ್ ಹೊಂದಿರುವ ಮೈಲ್ಡ್ ಬಿಯರ್‌ಗಳತ್ತ ಗ್ರಾಹಕರು ಹೆಚ್ಚು ಆಕರ್ಷಿತರಾಗುತ್ತಿದ್ದಾರೆ.

ಅಧಿಕೃತ ಅಂಕಿ-ಅಂಶಗಳ ಪ್ರಕಾರ, ಏಪ್ರಿಲ್‌ನಿಂದ ಜೂನ್‌ವರೆಗಿನ ಮೊದಲ ತ್ರೈಮಾಸಿಕದಲ್ಲಿ ಬಿಯರ್ ಮಾರಾಟದಿಂದಲೇ ಸರ್ಕಾರಕ್ಕೆ 312.67 ಕೋಟಿ ರೂ. ಹೆಚ್ಚುವರಿ ಆದಾಯ ಬಂದಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 1,602.14 ಕೋಟಿ ರೂ. ಆದಾಯ ಬಂದಿದ್ದರೆ, ಈ ಬಾರಿ 1,914.81 ಕೋಟಿ ರೂ. ಸಂಗ್ರಹವಾಗಿದೆ.

ಭಾರತೀಯ ಮದ್ಯ (IML) ಮಾರಾಟದಿಂದಲೂ ಆದಾಯ ಹೆಚ್ಚಾಗಿದ್ದು, ಕಳೆದ ವರ್ಷದ 7,407.53 ಕೋಟಿ ರೂ.ಗೆ ಹೋಲಿಸಿದರೆ ಈ ಬಾರಿ 8,394.32 ಕೋಟಿ ರೂ. ಆದಾಯ ಸಂಗ್ರಹವಾಗಿದೆ.

ಒಟ್ಟಾರೆಯಾಗಿ ಮೊದಲ ತ್ರೈಮಾಸಿಕದಲ್ಲಿ ಅಬಕಾರಿ ಇಲಾಖೆ 10,599.29 ಕೋಟಿ ರೂ. ರಾಜಸ್ವ ಸಂಗ್ರಹಿಸಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ಶೇ.14.39ರಷ್ಟು ಬೆಳವಣಿಗೆ ಕಂಡಿದೆ.

ಹೊಸ ತೆರಿಗೆ ನೀತಿಯಿಂದಾಗಿ ಪ್ರೀಮಿಯಂ ಲಾಗರ್ ಬಿಯರ್‌ಗಳ ಬೆಲೆಯಲ್ಲಿ ಇಳಿಕೆಯಾಗಿದ್ದು, ಗ್ರಾಹಕರ ಬೇಡಿಕೆ ಹೆಚ್ಚಾಗಿದೆ. ಕೆಲವು ಪ್ರೀಮಿಯಂ ಬಿಯರ್‌ಗಳ ದರದಲ್ಲಿ ಭಾರೀ ಇಳಿಕೆ ಕಂಡುಬಂದಿದೆ ಎಂದು ವರದಿಯಾಗಿದೆ.

ಇನ್ನು 2026-27ರ ಹಣಕಾಸು ವರ್ಷಕ್ಕೆ ಸರ್ಕಾರವು 45,000 ಕೋಟಿ ರೂ. ಅಬಕಾರಿ ಆದಾಯದ ಗುರಿ ಹೊಂದಿದ್ದು, ಆದಾಯ ಹೆಚ್ಚಳಕ್ಕಾಗಿ ಬಳಕೆಯಾಗದ ಹಾಗೂ ರದ್ದಾದ ಮದ್ಯದಂಗಡಿ ಮತ್ತು ಬಾರ್ ಪರವಾನಗಿಗಳನ್ನು ಆನ್‌ಲೈನ್ ಹರಾಜು ಮೂಲಕ ವಿಲೇವಾರಿ ಮಾಡಲು ಇಲಾಖೆ ಮುಂದಾಗಿದೆ.

ಬದರಿನಾಥ ದೇವಾಲಯದ ದೇಣಿಗೆ ಹಣ ದುರುಪಯೋಗ ಆರೋಪ; ತನಿಖೆಗೆ ಉನ್ನತ ಮಟ್ಟದ ಸಮಿತಿ ರಚನೆ!

ಡೆಹ್ರಾಡೂನ್: ಉತ್ತರಾಖಂಡದ ಪ್ರಸಿದ್ಧ ಬದರಿನಾಥ ದೇವಾಲಯದಲ್ಲಿ ಭಕ್ತರು ನೀಡಿದ ಕಾಣಿಕೆ ಹಾಗೂ ದೇಣಿಗೆ ಹಣ ದುರುಪಯೋಗವಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ಮೂವರು ಸದಸ್ಯರ ಉನ್ನತ ಮಟ್ಟದ ಸಮಿತಿಯನ್ನು ರಚಿಸಿದೆ.

ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರ ಆದೇಶದ ಮೇರೆಗೆ ರಚಿಸಲಾಗಿರುವ ಸಮಿತಿಗೆ ಗರ್ವಾಲ್ ಆಯುಕ್ತ ಆನಂದ್ ಸ್ವರೂಪ್ ನೇತೃತ್ವ ವಹಿಸಲಿದ್ದಾರೆ. ರಾಷ್ಟ್ರೀಯ ಆರೋಗ್ಯ ಮಿಷನ್‌ನ ವ್ಯವಸ್ಥಾಪಕ ನಿರ್ದೇಶಕ ಸಂದೀಪ್ ತಿವಾರಿ ಹಾಗೂ ಹಣಕಾಸು ನಿರ್ದೇಶಕ ಜಗತ್ ಸಿಂಗ್ ಚೌಹಾಣ್ ಸಮಿತಿಯ ಸದಸ್ಯರಾಗಿದ್ದಾರೆ.

ದೇಣಿಗೆ ಅಕ್ರಮಗಳ ಕುರಿತು ಸಮಗ್ರ ತನಿಖೆ ನಡೆಸಿ 15 ದಿನಗಳೊಳಗೆ ವರದಿ ಸಲ್ಲಿಸುವಂತೆ ಸಮಿತಿಗೆ ಸೂಚಿಸಲಾಗಿದೆ. ಜೊತೆಗೆ ದೇವಸ್ಥಾನದ ಆಡಳಿತ ವ್ಯವಸ್ಥೆ ಹಾಗೂ ಹಣ ಎಣಿಕೆ ಪ್ರಕ್ರಿಯೆಯನ್ನು ಮತ್ತಷ್ಟು ಪಾರದರ್ಶಕಗೊಳಿಸುವ ಜವಾಬ್ದಾರಿಯನ್ನೂ ನೀಡಲಾಗಿದೆ.

ಇದೇ ವೇಳೆ ಶ್ರೀ ಬದರಿನಾಥ-ಕೇದಾರನಾಥ ದೇವಾಲಯ ಸಮಿತಿಯು ಆಂತರಿಕ ತನಿಖೆ ನಡೆಸಿದ್ದು, ಪ್ರಾಥಮಿಕ ತನಿಖೆಯಲ್ಲಿ ಅಕ್ರಮದ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ದೇವಾಲಯ ಸಮಿತಿಯ ಖಾಸಗಿ ಕಾರ್ಯದರ್ಶಿ ಪ್ರಮೋದ್ ನೌಟಿಯಾಲ್ ಅವರನ್ನು ಅಮಾನತು ಮಾಡಲಾಗಿದೆ.

ಬದರಿನಾಥ ಧಾಮದಲ್ಲಿ ಕಾಣಿಕೆ ಹಣ ಎಣಿಕೆ ವೇಳೆ ಅಕ್ರಮ ನಡೆದಿದೆ ಎನ್ನಲಾದ ವಿಡಿಯೋಗಳು ಹಾಗೂ ಸಾಮಾಜಿಕ ಜಾಲತಾಣದ ಪೋಸ್ಟ್‌ಗಳು ವೈರಲ್ ಆದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. ಸ್ಥಳೀಯ ಸಂಘಟನೆಯೊಂದು ತನಿಖೆ ನಡೆಸುವಂತೆ ಹಾಗೂ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ನೀಡಿತ್ತು.

ಇನ್ನು ಎಣಿಕೆ ಕೊಠಡಿಯಲ್ಲಿದ್ದ ಸಿಸಿಟಿವಿ ಕ್ಯಾಮೆರಾಗಳ ಬದಲಾವಣೆ ಕುರಿತು ವಿವಾದ ಉಂಟಾಗಿದ್ದು, ಇದು ನಿಯಮಿತ ಪ್ರಕ್ರಿಯೆ ಎಂದು ದೇವಾಲಯ ಸಮಿತಿ ಸ್ಪಷ್ಟನೆ ನೀಡಿದೆ. ಹಳೆಯ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಸುರಕ್ಷಿತವಾಗಿ ಸಂಗ್ರಹಿಸಲಾಗಿದ್ದು, ತನಿಖಾ ತಂಡಕ್ಕೆ ನೀಡಲಾಗುವುದು ಎಂದು ತಿಳಿಸಿದೆ.

ಹೇಮಾವತಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು; ಬೇಲೂರು ಭಾಗದ ಶಾಲೆಗಳಿಗೆ ರಜೆ ಘೋಷಣೆ!

ಹಾಸನ: ಜಿಲ್ಲೆಯಲ್ಲಿ ವರುಣನ ಅಬ್ಬರ ಮುಂದುವರಿದಿದ್ದು, ಸಕಲೇಶಪುರ, ಆಲೂರು, ಬೇಲೂರು ಹಾಗೂ ಅರಕಲಗೂಡು ಭಾಗಗಳಲ್ಲಿ ಭಾರೀ ಗಾಳಿ ಸಹಿತ ನಿರಂತರ ಮಳೆಯಾಗುತ್ತಿದೆ.

ಪಕ್ಕದ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಭಾಗದಲ್ಲೂ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆಯ ಗೊರೂರಿನ ಹೇಮಾವತಿ ಜಲಾಶಯಕ್ಕೆ ಒಳಹರಿವು ಗಣನೀಯವಾಗಿ ಹೆಚ್ಚಾಗಿದೆ.

ಸದ್ಯ ಹೇಮಾವತಿ ಜಲಾಶಯಕ್ಕೆ 16,593 ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, 300 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ. 37.103 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಪ್ರಸ್ತುತ 18.782 ಟಿಎಂಸಿ ನೀರು ಸಂಗ್ರಹವಾಗಿದೆ. ಜಲಾಶಯದ ನೀರಿನ ಮಟ್ಟ 2898.40 ಅಡಿಗಳಷ್ಟಿದೆ.

ಇನ್ನು ಬೇಲೂರು ತಾಲೂಕಿನಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಕೆಲವು ಭಾಗಗಳ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಅರೇಹಳ್ಳಿ, ಬಿಕ್ಕೋಡು, ಚೀಕನಹಳ್ಳಿ ಹೋಬಳಿಗಳು ಹಾಗೂ ಕಸಬಾ ಎ, ಕಸಬಾ ಬಿ ವಲಯಗಳ ಎಲ್ಲಾ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಇಂದು ರಜೆ ನೀಡಲಾಗಿದೆ.

ಬೇಲೂರು ತಹಶೀಲ್ದಾರ್ ಶ್ರೀಧರ್ ಕಂಕನವಾಡಿ ಅವರು ಈ ಆದೇಶ ಹೊರಡಿಸಿದ್ದು, ರಜೆ ನೀಡಿದ ದಿನದ ಬದಲಿಗೆ ಶನಿವಾರ ಪೂರ್ಣ ದಿನ ಶಾಲೆ ನಡೆಸುವಂತೆ ಸೂಚಿಸಿದ್ದಾರೆ.

ಮಲೆನಾಡಿನಲ್ಲಿ ಮಳೆಯ ಎಫೆಕ್ಟ್; ಉಕ್ಕಡಗಾತ್ರಿ ಕ್ಷೇತ್ರಕ್ಕೆ ನುಗ್ಗಿದ ತುಂಗಭದ್ರಾ ನೀರು!

ದಾವಣಗೆರೆ: ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ತುಂಗಭದ್ರಾ ನದಿ ಉಕ್ಕಿ ಹರಿಯುತ್ತಿದ್ದು, ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಪ್ರಸಿದ್ಧ ಉಕ್ಕಡಗಾತ್ರಿ ಅಜ್ಜಯ್ಯ ದೇವಸ್ಥಾನದ ಮುಂಭಾಗಕ್ಕೆ ನೀರು ನುಗ್ಗಿದೆ.

ದಾವಣಗೆರೆ ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಕಡಿಮೆಯಿದ್ದರೂ, ಶಿವಮೊಗ್ಗ ಜಿಲ್ಲೆಯ ಮಲೆನಾಡು ಭಾಗದಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಗಾಜನೂರು ತುಂಗಾ ಜಲಾಶಯದಿಂದ ನದಿಗೆ ಹೆಚ್ಚಿನ ಪ್ರಮಾಣದ ನೀರು ಹರಿಸಲಾಗಿದೆ. ಇದರಿಂದ ತುಂಗಭದ್ರಾ ನದಿಯ ನೀರಿನ ಮಟ್ಟ ಏರಿಕೆಯಾಗಿದೆ.

ನೀರಿನ ಮಟ್ಟ ಹೆಚ್ಚಾದ ಪರಿಣಾಮ ಭಕ್ತರು ಪವಿತ್ರ ಸ್ನಾನ ಮಾಡುವ ಪ್ರಮುಖ ಸ್ನಾನಘಟ್ಟ ಸಂಪೂರ್ಣವಾಗಿ ಮುಳುಗಡೆಯಾಗಿದೆ. ಸ್ನಾನಘಟ್ಟದ ಸಮೀಪದಲ್ಲಿದ್ದ ಹತ್ತಕ್ಕೂ ಹೆಚ್ಚು ಪೂಜಾ ಸಾಮಗ್ರಿ ಹಾಗೂ ಇತರೆ ವ್ಯಾಪಾರಿಗಳ ಅಂಗಡಿಗಳಿಗೆ ನೀರು ನುಗ್ಗಿದ್ದು, ಜಲಾವೃತಗೊಂಡಿವೆ.

ಪರಿಸ್ಥಿತಿಯ ಗಂಭೀರತೆ ಅರಿತ ದೇವಸ್ಥಾನದ ಆಡಳಿತ ಮಂಡಳಿ, ನದಿ ತೀರದಲ್ಲಿದ್ದ ಅಂಗಡಿ ಮುಂಗಟ್ಟುಗಳನ್ನು ತಕ್ಷಣವೇ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿದೆ.

ತುಂಗಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭಕ್ತರು ಹಾಗೂ ಸಾರ್ವಜನಿಕರು ಯಾವುದೇ ಕಾರಣಕ್ಕೂ ನದಿ ಪಾತ್ರಕ್ಕೆ ಇಳಿಯಬಾರದು ಎಂದು ದೇವಸ್ಥಾನ ಆಡಳಿತ ಮಂಡಳಿ ಹಾಗೂ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಭಕ್ತರ ಸುರಕ್ಷತೆಗಾಗಿ ನದಿ ತೀರದಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.