Home Blog

ಮುಂಗಾರು ಅಧಿವೇಶನದ ಮೊದಲ ದಿನವೇ ಉದ್ವಿಗ್ನ ಪರಿಸ್ಥಿತಿ; ‘ಚಲೋ ಸಂಸತ್’ ಮೆರವಣಿಗೆ ತಡೆದ ಪೊಲೀಸರು, ಹಲವರು ವಶಕ್ಕೆ

0

ನವದೆಹಲಿ: ಸಂಸತ್ ಮುತ್ತಿಗೆಗೆ ಯತ್ನಿಸಿದ ಕಾಕ್ರೋಚ್ ಜನತಾ ಪಾರ್ಟಿ (CJP) ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ. ಲಾಠಿಚಾರ್ಜ್ ಬಳಿಕ ದೆಹಲಿಯ ಕೆಲವು ಪ್ರದೇಶಗಳಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.

ಸಂಸತ್ತಿನ ಮುಂಗಾರು ಅಧಿವೇಶನದ ಮೊದಲ ದಿನವಾದ ಜುಲೈ 20ರಂದು ನವದೆಹಲಿಯ ಜಂತರ್ ಮಂತರ್‌ನಿಂದ ಸಂಸತ್ ಭವನದತ್ತ ‘ಚಲೋ ಸಂಸತ್’ ಮೆರವಣಿಗೆ ನಡೆಸಲು ಸಿಜೆಪಿ ಕರೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಸಾವಿರಕ್ಕೂ ಅಧಿಕ ಸಂಖ್ಯೆಯಲ್ಲಿ ಪಕ್ಷದ ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳು ಜಂತರ್ ಮಂತರ್‌ನಲ್ಲಿ ಜಮಾಯಿಸಿದ್ದರು.

ಸಂಸತ್ತಿನತ್ತ ತೆರಳಲು ಪ್ರತಿಭಟನಾಕಾರರು ಮುಂದಾದಾಗ ಪೊಲೀಸರು ಅವರನ್ನು ತಡೆದರು. ಈ ವೇಳೆ ಪ್ರತಿಭಟನಾಕಾರರು ಬ್ಯಾರಿಕೇಡ್‌ಗಳನ್ನು ದಾಟಿ ಮುನ್ನುಗ್ಗಲು ಯತ್ನಿಸಿದ ಹಿನ್ನೆಲೆಯಲ್ಲಿ ಪೊಲೀಸರು ಲಾಠಿ ಪ್ರಯೋಗಿಸಿದ್ದಾರೆ. ಪರಿಸ್ಥಿತಿ ನಿಯಂತ್ರಣಕ್ಕೆ ತರಲು ನಡೆಸಿದ ಲಾಠಿಚಾರ್ಜ್‌ನಲ್ಲಿ ಹಲವು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮುಂಜಾಗ್ರತಾ ಕ್ರಮವಾಗಿ ದೆಹಲಿ ಪೊಲೀಸರು ಹಾಗೂ ರ‍್ಯಾಪಿಡ್ ಆಕ್ಷನ್ ಫೋರ್ಸ್ (RAF) ಸಿಬ್ಬಂದಿಯನ್ನು ನಿಯೋಜಿಸಿ ಜಂತರ್ ಮಂತರ್ ಸುತ್ತಮುತ್ತ ಬಿಗಿ ಭದ್ರತೆ ಕೈಗೊಳ್ಳಲಾಗಿತ್ತು. ಪ್ರತಿಭಟನಾಕಾರರು ಪೊಲೀಸ್ ಭದ್ರತೆಯನ್ನು ಮೀರಿ ಮುನ್ನುಗ್ಗಲು ಯತ್ನಿಸಿದಾಗ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ಸಂಸತ್ ಅಧಿವೇಶನ ಆರಂಭವಾಗಿರುವ ಹಿನ್ನೆಲೆಯಲ್ಲಿ ದೆಹಲಿ ನಗರದಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS)ಯ ಸೆಕ್ಷನ್ 163ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಈ ಮೆರವಣಿಗೆಗೆ ಅಧಿಕೃತ ಅನುಮತಿ ನೀಡಲಾಗಿರಲಿಲ್ಲ. ಕಾನೂನು ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ಮುಂಚಿತವಾಗಿಯೇ ಎಚ್ಚರಿಕೆ ನೀಡಿದ್ದರು.

Gold Rate Today: ಬೆಂಗಳೂರು ಸೇರಿ ಪ್ರಮುಖ ನಗರಗಳ ಇಂದಿನ ಚಿನ್ನದ ದರ ಹೀಗಿದೆ

ಬೆಂಗಳೂರು: ಕಳೆದ ಕೆಲವು ದಿನಗಳಿಂದ ಏರಿಳಿತ ಕಾಣುತ್ತಿದ್ದ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಮತ್ತೆ ಏರಿಕೆ ಕಂಡುಬಂದಿದೆ. ಜುಲೈ ತಿಂಗಳ ಮೂರನೇ ವಾರದ ಆರಂಭದಲ್ಲೇ ಬೆಲೆಗಳು ಏರುಮುಖವಾಗಿದ್ದು, ಬೆಂಗಳೂರಿನಲ್ಲಿ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಹೆಚ್ಚಳವಾಗಿದೆ ಎಂದು ಗುಡ್‌ರಿಟರ್ನ್ಸ್ ವರದಿ ಮಾಡಿದೆ.

ಜುಲೈ 20, 2026ರ ಸೋಮವಾರದ ದರದ ಪ್ರಕಾರ, 24 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಪ್ರತಿ ಗ್ರಾಂಗೆ 17 ರೂಪಾಯಿ ಏರಿಕೆಯಾಗಿದೆ. ಇದರಿಂದ ಒಂದು ಗ್ರಾಂ ಚಿನ್ನದ ಬೆಲೆ 14,346 ರೂಪಾಯಿಗೆ ತಲುಪಿದೆ. 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ 170 ರೂಪಾಯಿ ಏರಿಕೆಯಾಗಿದ್ದು, ಪ್ರಸ್ತುತ ಬೆಲೆ 1,43,460 ರೂಪಾಯಿ ದಾಖಲಾಗಿದೆ.

ಇದೇ ವೇಳೆ 22 ಕ್ಯಾರೆಟ್ ಚಿನ್ನದ ದರದಲ್ಲೂ ಏರಿಕೆ ಕಂಡುಬಂದಿದೆ. ಪ್ರತಿ ಗ್ರಾಂಗೆ 15 ರೂಪಾಯಿ ಹೆಚ್ಚಳವಾಗಿದ್ದು, ಒಂದು ಗ್ರಾಂ ಚಿನ್ನದ ಬೆಲೆ 13,150 ರೂಪಾಯಿಗೆ ತಲುಪಿದೆ. 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 150 ರೂಪಾಯಿ ಏರಿಕೆಯಾಗಿ, 1,31,500 ರೂಪಾಯಿ ದಾಖಲಾಗಿದೆ.

ಬೆಳ್ಳಿ ದರದಲ್ಲಿಯೂ ಭಾರೀ ಏರಿಕೆ ಕಂಡುಬಂದಿದ್ದು, ಪ್ರತಿ ಕೆಜಿಗೆ 5 ಸಾವಿರ ರೂಪಾಯಿ ಹೆಚ್ಚಳವಾಗಿದೆ. ಬೆಂಗಳೂರಿನಲ್ಲಿ ಒಂದು ಗ್ರಾಂ ಬೆಳ್ಳಿಯ ಬೆಲೆ 235 ರೂಪಾಯಿ ಇದ್ದು, ಒಂದು ಕೆಜಿ ಬೆಳ್ಳಿಯ ದರ 2,35,000 ರೂಪಾಯಿಗೆ ತಲುಪಿದೆ.

ಜುಲೈ 1ರಂದು ಬೆಂಗಳೂರಿನಲ್ಲಿ ಚಿನ್ನದ ಬೆಲೆ ಪ್ರತಿ ಗ್ರಾಂಗೆ 14,078 ರೂಪಾಯಿ ಇತ್ತು. ಇದೀಗ ಜುಲೈ 20ರಂದು ಅದು 14,346 ರೂಪಾಯಿಗೆ ಏರಿಕೆಯಾಗಿದೆ. ಈ ತಿಂಗಳಲ್ಲಿ ಚಿನ್ನದ ಗರಿಷ್ಠ ದರ 14,700 ರೂಪಾಯಿವರೆಗೆ ತಲುಪಿತ್ತು.

ಮಧ್ಯಪ್ರಾಚ್ಯದಲ್ಲಿನ ಬಿಕ್ಕಟ್ಟು ಹಾಗೂ ಜಾಗತಿಕ ತೈಲ ಬೆಲೆ ಏರಿಕೆಯ ಪರಿಣಾಮ ಕಳೆದ ವಾರ ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡುಬಂದಿತ್ತು. ಇದರ ನಡುವೆ ಅಮೆರಿಕ ಮತ್ತು ಇರಾನ್ ನಡುವಿನ ಶಾಂತಿ ಒಪ್ಪಂದ ರದ್ದಾಗಿರುವುದು ಹಾಗೂ ಇರಾನ್ ವಿರುದ್ಧದ ಸಂಘರ್ಷದ ಆತಂಕವೂ ಜಾಗತಿಕ ಮಾರುಕಟ್ಟೆಯ ಮೇಲೆ ಪರಿಣಾಮ ಬೀರುತ್ತಿದೆ.

ಜಾಗತಿಕ ರಾಜಕೀಯ ಮತ್ತು ಆರ್ಥಿಕ ಬೆಳವಣಿಗೆಗಳಿಗೆ ಅನುಗುಣವಾಗಿ ಮುಂದಿನ ದಿನಗಳಲ್ಲಿ ಚಿನ್ನ ಮತ್ತು ಬೆಳ್ಳಿ ಬೇಡಿಕೆ ಹಾಗೂ ದರದಲ್ಲಿ ಮತ್ತಷ್ಟು ಏರಿಳಿತ ಕಾಣುವ ಸಾಧ್ಯತೆ ಇದೆ ಎಂದು ಮಾರುಕಟ್ಟೆ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ದೇಶದ ಅಭಿವೃದ್ಧಿಗೆ ಸಂಸತ್ ಸಹಕಾರಿಯಾಗಲಿ: ಆರ್ಥಿಕ ಬೆಳವಣಿಗೆ, ಬಾಹ್ಯಾಕಾಶ ಸಾಧನೆ ಪ್ರಸ್ತಾಪಿಸಿದ ಪ್ರಧಾನಿ ಮೋದಿ

0

ನವದೆಹಲಿ: ಸಂಸತ್ತಿನ ಮಾನ್ಸೂನ್ ಅಧಿವೇಶನ ಆರಂಭಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ದೇಶವನ್ನುದ್ದೇಶಿಸಿ ಮಾತನಾಡಿ, ಅಧಿವೇಶನವು ದೇಶದ ಅಭಿವೃದ್ಧಿಗೆ ಪೂರಕವಾಗುವಂತೆ ಫಲಪ್ರದವಾಗಿ ನಡೆಯಲಿ ಎಂದು ಆಶಿಸಿದರು. ಇದೇ ವೇಳೆ ಕಳೆದ ಕೆಲವು ತಿಂಗಳಲ್ಲಿ ಭಾರತ ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ದಾಖಲಿಸಿರುವ ಹಲವು ಮಹತ್ವದ ಸಾಧನೆಗಳನ್ನು ಪ್ರಸ್ತಾಪಿಸಿದರು.

ಮಾನ್ಸೂನ್ ಮಳೆ ದೇಶದ ಕೃಷಿ ಮತ್ತು ಆರ್ಥಿಕತೆಗೆ ಎಷ್ಟು ಅಗತ್ಯವೋ, ಅದೇ ರೀತಿ ಸಂಸತ್ತಿನ ಮಾನ್ಸೂನ್ ಅಧಿವೇಶನವೂ ದೇಶದ ಪ್ರಗತಿಗೆ ಸಹಕಾರಿಯಾಗಬೇಕು ಎಂದು ಪ್ರಧಾನಿ ಹೇಳಿದರು. ಇತ್ತೀಚಿನ ದಿನಗಳಲ್ಲಿ ಭಾರತ ಹಲವು ಕ್ಷೇತ್ರಗಳಲ್ಲಿ ಹೊಸ ಮೈಲಿಗಲ್ಲುಗಳನ್ನು ಸ್ಥಾಪಿಸಿದ್ದು, ದೇಶದ ಸಾಧನೆಗಳು ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆ ತರುವಂತಿವೆ ಎಂದು ತಿಳಿಸಿದರು.

ಇತ್ತೀಚೆಗೆ ಖಾಸಗಿ ಬಾಹ್ಯಾಕಾಶ ಸಂಸ್ಥೆ ಸ್ಕೈರೂಟ್ ಸಾಧಿಸಿರುವ ಯಶಸ್ಸನ್ನು ಉಲ್ಲೇಖಿಸಿದ ಪ್ರಧಾನಿ, ದೇಶದ ಯುವ ಪ್ರತಿಭೆಗಳು ಹೊಸ ಆವಿಷ್ಕಾರಗಳ ಮೂಲಕ ಭಾರತಕ್ಕೆ ಹೊಸ ದಿಕ್ಕು ತೋರಿಸುತ್ತಿವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಇದೇ ವೇಳೆ, “ನಾನು 56 ವರ್ಷದ ಯುವಕರ ಬಗ್ಗೆ ಮಾತನಾಡುತ್ತಿಲ್ಲ” ಎಂದು ಹೇಳುವ ಮೂಲಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಪರೋಕ್ಷವಾಗಿ ಟಾಂಗ್ ನೀಡಿದರು.

ಪಶ್ಚಿಮ ಏಷ್ಯಾದ ಯುದ್ಧದ ಪರಿಣಾಮ ಜಾಗತಿಕ ಇಂಧನ ಕ್ಷೇತ್ರದಲ್ಲಿ ಹಲವು ಸವಾಲುಗಳು ಎದುರಾಗಿದ್ದರೂ, ಭಾರತವು ಶೇ. 7.7ರ ಆರ್ಥಿಕ ಬೆಳವಣಿಗೆಯನ್ನು ಕಾಯ್ದುಕೊಂಡಿದೆ ಎಂದು ಪ್ರಧಾನಿ ಹೇಳಿದರು. ಇದು ದೇಶದ ಆರ್ಥಿಕ ಸಾಮರ್ಥ್ಯ ಮತ್ತು ಸ್ಥಿರತೆಯನ್ನು ಪ್ರತಿಬಿಂಬಿಸುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.

ರಾಜಸ್ಥಾನದಲ್ಲಿ ನಿರ್ಮಾಣವಾಗುತ್ತಿರುವ ತೈಲ ಸಂಸ್ಕರಣಾಗಾರ, ಸೆಮಿಕಂಡಕ್ಟರ್ ಉತ್ಪಾದನಾ ಘಟಕ, ಹಸಿರು ಹೈಡ್ರೋಜನ್ ರೈಲು ಸೇರಿದಂತೆ ಹಲವು ಮಹತ್ವಾಕಾಂಕ್ಷಿ ಅಭಿವೃದ್ಧಿ ಯೋಜನೆಗಳನ್ನು ಉಲ್ಲೇಖಿಸಿದ ಪ್ರಧಾನಿ ಮೋದಿ, ಇವುಗಳು ಭಾರತ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರ ಎಂಬುದಕ್ಕೆ ಸ್ಪಷ್ಟ ಸಾಕ್ಷಿಯಾಗಿವೆ ಎಂದು ಹೇಳಿದರು.

 

ಅರ್ಜುನ್ ಕಪೂರ್ ಜೊತೆ ಕ್ರೀಡಾಂಗಣದಲ್ಲಿ ಕಾಣಿಸಿಕೊಂಡ ಸಾಹಿಬಾ ಬಾಲಿ: ಡೇಟಿಂಗ್ ವದಂತಿಗೆ ಹೊಸ ಕಿಚ್ಚು

ಮುಂಬೈ: ಬಾಲಿವುಡ್ ನಟ ಅರ್ಜುನ್ ಕಪೂರ್ ಹಾಗೂ ನಟಿ-ಕಂಟೆಂಟ್ ಕ್ರಿಯೇಟರ್ ಸಾಹಿಬಾ ಬಾಲಿ ಇಂಗ್ಲೆಂಡ್ ವಿರುದ್ಧದ ಮೂರನೇ ಏಕದಿನ ಪಂದ್ಯವನ್ನು ಒಟ್ಟಿಗೆ ವೀಕ್ಷಿಸಿದ ಬಳಿಕ ಇಬ್ಬರ ಸಂಬಂಧದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಚರ್ಚೆ ಶುರುವಾಗಿದೆ. ಜುಲೈ 19ರಂದು ನಡೆದ ಪಂದ್ಯದಲ್ಲಿ ಕ್ರೀಡಾಂಗಣದ ಗ್ಯಾಲರಿಯಲ್ಲಿ ಇಬ್ಬರೂ ಜೊತೆಯಾಗಿ ಕಾಣಿಸಿಕೊಂಡಿರುವ ವಿಡಿಯೋ ಮತ್ತು ಫೋಟೋಗಳು ವೈರಲ್ ಆಗಿದ್ದು, ಡೇಟಿಂಗ್ ವದಂತಿಗಳಿಗೆ ಮತ್ತಷ್ಟು ಬಲ ನೀಡಿವೆ.

ಪಂದ್ಯದ ವೇಳೆ ಅರ್ಜುನ್ ಮತ್ತು ಸಾಹಿಬಾ ರಿಲ್ಯಾಕ್ಸ್ ಆಗಿ ಪಂದ್ಯವನ್ನು ಎಂಜಾಯ್ ಮಾಡುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿವೆ. ಇಬ್ಬರೂ ಒಂದೇ ಬಣ್ಣದ ಉಡುಪು ಧರಿಸಿರುವುದು ನೆಟ್ಟಿಗರ ಗಮನ ಸೆಳೆದಿದ್ದು, ಸ್ನೇಹಕ್ಕಿಂತ ಮೀರಿದ ಸಂಬಂಧ ಇದೆಯೇ ಎಂಬ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಆದರೆ ಈ ವದಂತಿಗಳ ಬಗ್ಗೆ ಅರ್ಜುನ್ ಕಪೂರ್ ಅಥವಾ ಸಾಹಿಬಾ ಬಾಲಿ ಯಾವುದೇ ಅಧಿಕೃತ ಪ್ರತಿಕ್ರಿಯೆ ನೀಡಿಲ್ಲ.

ವಿಡಿಯೋ ವೈರಲ್ ಆದ ಬಳಿಕ ಅಭಿಮಾನಿಗಳಲ್ಲಿ ಹಲವು ಊಹಾಪೋಹಗಳು ಹರಿದಾಡಿವೆ. ಕೆಲವರು ಇಬ್ಬರಿಗೂ ಮುಂಚಿತವಾಗಿಯೇ ಶುಭಾಶಯ ಕೋರಿದರೆ, ಮತ್ತೊಬ್ಬರು ಸಾಹಿಬಾ ಬೇರೆ ವ್ಯಕ್ತಿಯೊಂದಿಗೆ ಸಂಬಂಧದಲ್ಲಿದ್ದರು ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಕೆಲ ನೆಟ್ಟಿಗರು, ಸಾಹಿಬಾ ಕಂಟೆಂಟ್ ಕ್ರಿಯೇಟರ್ ಕುಲ್ಲು ಜೊತೆ ಪಂದ್ಯ ವೀಕ್ಷಿಸಲು ಬಂದಿದ್ದರು. ಅರ್ಜುನ್ ಕಪೂರ್ ಅದೇ ಸ್ನೇಹಿತರ ಗುಂಪಿನ ಭಾಗವಾಗಿದ್ದರು ಎಂದು ಸ್ಪಷ್ಟನೆ ನೀಡಿದ್ದಾರೆ.

ಇತ್ತೀಚೆಗೆ ಅರ್ಜುನ್ ಕಪೂರ್ ಜನ್ಮದಿನದಂದು ಸಾಹಿಬಾ ಬಾಲಿ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ, “ಎಲ್ಲರ ಬೆಸ್ಟಿಗೆ ಹುಟ್ಟುಹಬ್ಬದ ಶುಭಾಶಯಗಳು. ತೂಕ ಇಳಿಸುವುದನ್ನು ನಿಲ್ಲಿಸಿ, ಸ್ವಲ್ಪ ಕೇಕ್ ತಿನ್ನಿ” ಎಂದು ತಮಾಷೆಯಾಗಿ ಪೋಸ್ಟ್ ಮಾಡಿದ್ದರು. ಅದಕ್ಕೆ ಅರ್ಜುನ್, “ನೀನು ನನ್ನ ಜೊತೆ ಸೇರಿಕೊಳ್ಳಲು ಕಾಯುತ್ತಿದ್ದೇನೆ” ಎಂದು ಪ್ರತಿಕ್ರಿಯಿಸಿದ್ದರು. ಈ ಸಂಭಾಷಣೆಯೂ ಅಭಿಮಾನಿಗಳ ಗಮನ ಸೆಳೆದಿತ್ತು.

ಸಾಹಿಬಾ ಬಾಲಿ ನಟಿ ಹಾಗೂ ಕಂಟೆಂಟ್ ಕ್ರಿಯೇಟರ್ ಆಗಿದ್ದು, ತಾವು ಸಿಂಗಲ್ ಎಂದು ಈ ಹಿಂದೆಯೇ ಸ್ಪಷ್ಟಪಡಿಸಿದ್ದರು. ಕಂಟೆಂಟ್ ಕ್ರಿಯೇಟರ್ ಕುಲ್ಲು ಜೊತೆಗಿನ ತಮ್ಮ ಬಾಂಧವ್ಯ ವೃತ್ತಿಪರ ಸ್ನೇಹ ಮಾತ್ರ ಎಂದು ಹೇಳಿದ್ದರು. ಮತ್ತೊಂದೆಡೆ, ಅರ್ಜುನ್ ಕಪೂರ್ ನಟಿ ಮಲೈಕಾ ಅರೋರಾ ಜೊತೆ 2018ರಿಂದ ಸಂಬಂಧದಲ್ಲಿದ್ದು, 2024ರಲ್ಲಿ ಇಬ್ಬರೂ ಬೇರ್ಪಟ್ಟಿದ್ದರು. ಈಗ ಸಾಹಿಬಾ ಜೊತೆಗಿನ ಸಾರ್ವಜನಿಕ ಕಾಣಿಸಿಕೊಳ್ಳುವಿಕೆ ಹೊಸ ವದಂತಿಗಳಿಗೆ ಕಾರಣವಾಗಿದೆ. ಆದರೆ ಇಬ್ಬರ ನಡುವೆ ಪ್ರೇಮ ಸಂಬಂಧವಿದೆ ಎಂಬುದಕ್ಕೆ ಯಾವುದೇ ಅಧಿಕೃತ ದೃಢೀಕರಣ ಲಭ್ಯವಾಗಿಲ್ಲ.

ನಟಿ ಐಶ್ವರ್ಯ ಸಿಂದೋಗಿಗೆ ಸೋಷಿಯಲ್ ಮೀಡಿಯಾ ಕಿರುಕುಳ: ನಕಲಿ ಖಾತೆಗಳ ವಿರುದ್ಧ ಎಫ್‌ಐಆರ್, ಸೈಬರ್ ತನಿಖೆ ಆರಂಭ

ಬೆಂಗಳೂರು: ಸ್ಯಾಂಡಲ್‌ವುಡ್ ನಟಿಯರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಕಮೆಂಟ್‌ಗಳು ಹಾಗೂ ಮಾನಸಿಕ ಕಿರುಕುಳ ನೀಡುವ ಪ್ರಕರಣಗಳು ಮುಂದುವರಿದಿರುವ ನಡುವೆ, ಇದೀಗ ನಟಿ ಐಶ್ವರ್ಯ ಸಿಂದೋಗಿ ಕೂಡ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಪ್ರಕಟಿಸುವ ಪೋಸ್ಟ್‌ಗಳಿಗೆ ನಿರಂತರವಾಗಿ ಅಶ್ಲೀಲ, ಅವಹೇಳನಕಾರಿ ಹಾಗೂ ಆಕ್ಷೇಪಾರ್ಹ ಕಮೆಂಟ್‌ಗಳನ್ನು ಮಾಡಲಾಗುತ್ತಿದೆ ಎಂದು ಆರೋಪಿಸಿ ಅವರು ದೂರು ದಾಖಲಿಸಿದ್ದಾರೆ.

ದೂರಿನಲ್ಲಿ ನಟಿ, ತಮಗೆ ಪರಿಚಯವಿರುವ ವ್ಯಕ್ತಿಯೊಬ್ಬರ ಹೆಸರನ್ನು ಉಲ್ಲೇಖಿಸಿದ್ದು, ಇದೇ ವ್ಯಕ್ತಿ ಈ ಹಿಂದೆಯೂ ಬೆದರಿಕೆ ಹಾಕಿದ್ದ ಹಿನ್ನೆಲೆ ಪ್ರಕರಣ ದಾಖಲಾಗಿತ್ತು ಎಂದು ತಿಳಿಸಿದ್ದಾರೆ. ಈಗ ಅದೇ ವ್ಯಕ್ತಿ ನಕಲಿ ಸಾಮಾಜಿಕ ಜಾಲತಾಣ ಖಾತೆಗಳನ್ನು ಸೃಷ್ಟಿಸಿ ಅವುಗಳ ಮೂಲಕ ನಿರಂತರವಾಗಿ ಕೆಟ್ಟ ಕಮೆಂಟ್‌ಗಳನ್ನು ಪೋಸ್ಟ್ ಮಾಡುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ತಮಗೆ ಮಾನಸಿಕ ಕಿರುಕುಳ ನೀಡುತ್ತಿರುವ ಎಲ್ಲಾ ನಕಲಿ ಖಾತೆಗಳ ಹಿಂದೆ ಇರುವವರನ್ನು ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಐಶ್ವರ್ಯ ಸಿಂದೋಗಿ ಮನವಿ ಮಾಡಿದ್ದಾರೆ. ಅವರ ದೂರಿನ ಆಧಾರದಲ್ಲಿ ಬೆಂಗಳೂರಿನ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಪೊಲೀಸರು ಪ್ರಕರಣದ ತನಿಖೆಯನ್ನು ಆರಂಭಿಸಿದ್ದಾರೆ.

ಸಾಮಾಜಿಕ ಜಾಲತಾಣಗಳ ಮೂಲಕ ನಟಿಯರ ತೇಜೋವಧೆ ನಡೆಸುವ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕ ಮೂಡಿಸಿದೆ. ಇತ್ತೀಚೆಗೆ ನಟಿ ರಮ್ಯಾ ಹಾಗೂ ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ದರ್ಶನ್ ಕೂಡ ಇದೇ ರೀತಿಯ ಆನ್‌ಲೈನ್ ಕಿರುಕುಳದ ವಿರುದ್ಧ ದೂರು ದಾಖಲಿಸಿದ್ದರು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಸೈಬರ್ ಕ್ರೈಂ ಪೊಲೀಸರು ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮ ಕೈಗೊಂಡಿದ್ದರು.

ಆದರೂ ನಟಿಯರನ್ನು ಗುರಿಯಾಗಿಸಿಕೊಂಡು ನಕಲಿ ಖಾತೆಗಳ ಮೂಲಕ ಮಾನಹಾನಿ, ನಿಂದನೆ ಹಾಗೂ ಆನ್‌ಲೈನ್ ಕಿರುಕುಳ ನೀಡುವ ಪ್ರವೃತ್ತಿ ಇನ್ನೂ ಮುಂದುವರಿದಿದ್ದು, ಐಶ್ವರ್ಯ ಸಿಂದೋಗಿ ಪ್ರಕರಣ ಮತ್ತೊಮ್ಮೆ ಸೈಬರ್ ಅಪರಾಧಗಳ ವಿರುದ್ಧ ಕಠಿಣ ಕ್ರಮದ ಅಗತ್ಯವನ್ನು ಎತ್ತಿ ತೋರಿಸಿದೆ.

ಅಮೆರಿಕ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ದಂಪತಿಗೆ ಗಂಡು ಮಗು ಜನನ; ಅಪರೂಪದ ರಾಜಕೀಯ ದಾಖಲೆಗೆ ಸಾಕ್ಷಿಯಾದ ಕುಟುಂಬ

0

ವಾಷಿಂಗ್ಟನ್: ಅಮೆರಿಕದ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ಹಾಗೂ ಅವರ ಪತ್ನಿ, ಅಮೆರಿಕದ ಎರಡನೇ ಮಹಿಳೆ ಉಷಾ ವ್ಯಾನ್ಸ್ ದಂಪತಿಗೆ ನಾಲ್ಕನೇ ಮಗು ಜನಿಸಿದೆ. ಗಂಡು ಮಗುವಿಗೆ ‘ಅಲೆಕ್ ನೀಲ್ ವ್ಯಾನ್ಸ್’ ಎಂದು ಹೆಸರಿಡಲಾಗಿದ್ದು, ಈ ಸಂತಸದ ಸುದ್ದಿಯನ್ನು ಕುಟುಂಬ ಅಧಿಕೃತವಾಗಿ ಹಂಚಿಕೊಂಡಿದೆ.

ಭಾನುವಾರ ಬೆಳಿಗ್ಗೆ ಮೇರಿಲ್ಯಾಂಡ್‌ನ ವಾಲ್ಟರ್ ರೀಡ್ ರಾಷ್ಟ್ರೀಯ ಮಿಲಿಟರಿ ವೈದ್ಯಕೀಯ ಕೇಂದ್ರದಲ್ಲಿ ಉಷಾ ವ್ಯಾನ್ಸ್ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದು, ವೈದ್ಯಕೀಯ ಸೇವೆ ನೀಡಿದ ಆಸ್ಪತ್ರೆಯ ವೈದ್ಯರು ಹಾಗೂ ಶ್ವೇತಭವನದ ವೈದ್ಯಕೀಯ ತಂಡಕ್ಕೆ ಜೆ.ಡಿ. ವ್ಯಾನ್ಸ್ ಮತ್ತು ಉಷಾ ವ್ಯಾನ್ಸ್ ಕೃತಜ್ಞತೆ ಸಲ್ಲಿಸಿದ್ದಾರೆ. ವೈದ್ಯರು ಮತ್ತು ಸಿಬ್ಬಂದಿಯ ಸೇವೆಯನ್ನು ಅವರು ವಿಶೇಷವಾಗಿ ಪ್ರಶಂಸಿಸಿದ್ದಾರೆ.

ಅಲೆಕ್ ನೀಲ್ ವ್ಯಾನ್ಸ್ ದಂಪತಿಯ ನಾಲ್ಕನೇ ಮಗುವಾಗಿದೆ. ಈಗಾಗಲೇ ಅವರಿಗೆ ಇಬ್ಬರು ಗಂಡು ಮಕ್ಕಳು ಹಾಗೂ ಒಬ್ಬ ಪುತ್ರಿ ಇದ್ದಾರೆ. ತಮ್ಮ ಮಕ್ಕಳ ಖಾಸಗಿತನವನ್ನು ಕಾಪಾಡುವ ಉದ್ದೇಶದಿಂದ ಕುಟುಂಬವು ಅವರನ್ನು ಸಾರ್ವಜನಿಕ ಜೀವನದಿಂದ ದೂರವಿಡಲು ಹೆಚ್ಚಿನ ಆದ್ಯತೆ ನೀಡುತ್ತಿದೆ.

ಈ ಜನನ ಅಮೆರಿಕದ ರಾಜಕೀಯ ಇತಿಹಾಸದಲ್ಲೂ ವಿಶೇಷ ಮಹತ್ವ ಪಡೆದಿದೆ. ಸುಮಾರು 150 ವರ್ಷಗಳ ಬಳಿಕ ಅಧಿಕಾರದಲ್ಲಿರುವ ಅಮೆರಿಕದ ಉಪಾಧ್ಯಕ್ಷರೊಬ್ಬರಿಗೆ ಮಗು ಜನಿಸಿರುವ ಅಪರೂಪದ ಘಟನೆ ಇದಾಗಿದೆ. ಇದಕ್ಕೂ ಮೊದಲು 1870ರಲ್ಲಿ ಆಗಿನ ಉಪಾಧ್ಯಕ್ಷ ಶುಯ್ಲರ್ ಕೋಲ್ಫ್ಯಾಕ್ಸ್ ಅಧಿಕಾರದಲ್ಲಿದ್ದಾಗ ತಂದೆಯಾಗಿದ್ದರು.

41 ವರ್ಷದ ಜೆ.ಡಿ. ವ್ಯಾನ್ಸ್ ಅಮೆರಿಕದ ಕಿರಿಯ ಉಪಾಧ್ಯಕ್ಷರಲ್ಲಿ ಒಬ್ಬರಾಗಿದ್ದು, ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತದ ಪ್ರಮುಖ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಅವರ ಪತ್ನಿ ಉಷಾ ವ್ಯಾನ್ಸ್ ಭಾರತೀಯ ಮೂಲದವರಾಗಿದ್ದು, ಅವರ ಕುಟುಂಬ ಮೂಲತಃ ಆಂಧ್ರಪ್ರದೇಶಕ್ಕೆ ಸೇರಿದದ್ದಾಗಿದೆ.

ಉಪವಾಸ ಸತ್ಯಾಗ್ರಹ ಹಿಂಪಡೆಯಲು ಕೇಂದ್ರದ ಮುಂದೆ 3 ಷರತ್ತುಗಳನ್ನು ಮುಂದಿಟ್ಟ ಸೋನಮ್ ವಾಂಗ್ಚುಕ್!

0

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ಕಳೆದ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರು ತಮ್ಮ ಪ್ರತಿಭಟನೆಯನ್ನು ಹಿಂಪಡೆಯಲು ಕೇಂದ್ರ ಸರ್ಕಾರದ ಮುಂದೆ ಮೂರು ಪ್ರಮುಖ ಷರತ್ತುಗಳನ್ನು ಮುಂದಿಟ್ಟಿದ್ದಾರೆ.

ಈ ಬೇಡಿಕೆಗಳನ್ನು ಈಡೇರಿಸಿದರೆ ಮಾತ್ರ ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ. 21 ದಿನಗಳ ನಿರಂತರ ಉಪವಾಸದಿಂದ ಆರೋಗ್ಯ ಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಶನಿವಾರ ದೆಹಲಿ ಪೊಲೀಸರು ಸೋನಮ್ ವಾಂಗ್ಚುಕ್ ಅವರನ್ನು ಜಂತರ್ ಮಂತರ್‌ನಿಂದ ಸಫ್ದರ್‌ಜಂಗ್ ಆಸ್ಪತ್ರೆಗೆ ದಾಖಲಿಸಿದ್ದರು.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರು ಗ್ಲೂಕೋಸ್ ಹಾಗೂ ಇತರ ವೈದ್ಯಕೀಯ ನೆರವು ಸ್ವೀಕರಿಸಲು ನಿರಾಕರಿಸಿದ್ದು, ಸರ್ಕಾರದ ಸ್ಪಷ್ಟ ಭರವಸೆಯವರೆಗೂ ಹೋರಾಟ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ.

ಸೋನಮ್ ವಾಂಗ್ಚುಕ್ ಮುಂದಿಟ್ಟಿರುವ ಮೂರು ಪ್ರಮುಖ ಷರತ್ತುಗಳು

  1. ಸಂಸತ್ತಿನವರೆಗೆ ಶಾಂತಿಯುತ ಮೆರವಣಿಗೆಗೆ ಅವಕಾಶ:
    ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗಿರುವ ಹಿನ್ನೆಲೆಯಲ್ಲಿ ದೇಶದ ವಿವಿಧ ಭಾಗಗಳಿಂದ ಆಗಮಿಸಿರುವ ವಿದ್ಯಾರ್ಥಿಗಳು ಹಾಗೂ ಹೋರಾಟಗಾರರಿಗೆ ಸಂಸತ್ತಿನವರೆಗೆ ಶಾಂತಿಯುತ ಮೆರವಣಿಗೆ ನಡೆಸಲು ದೆಹಲಿ ಪೊಲೀಸರು ಅನುಮತಿ ನೀಡಬೇಕು.
  2. ಲಿಖಿತ ಭರವಸೆ ನೀಡಬೇಕು:
    ನೀಟ್ (NEET) ಪರೀಕ್ಷೆಯ ಅಕ್ರಮ, ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ಹಾಗೂ ಶಿಕ್ಷಣ ವ್ಯವಸ್ಥೆಯ ಸುಧಾರಣೆ ಕುರಿತು ಕೇಂದ್ರ ಶಿಕ್ಷಣ ಸಚಿವರು ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಅಧಿಕೃತ ಲಿಖಿತ ಭರವಸೆ ನೀಡಬೇಕು.
  3. ಹೋರಾಟಗಾರರ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯಬೇಕು:
    ಪ್ರತಿಭಟನೆ ವೇಳೆ ದೆಹಲಿ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ವಿದ್ಯಾರ್ಥಿಗಳು ಹಾಗೂ ಹೋರಾಟಗಾರರ ವಿರುದ್ಧ ದಾಖಲಿಸಿರುವ ಎಲ್ಲಾ ಎಫ್‌ಐಆರ್‌ಗಳನ್ನು ತಕ್ಷಣವೇ ಹಿಂಪಡೆಯಬೇಕು.

ವೈದ್ಯರ ಮಾಹಿತಿ ಪ್ರಕಾರ, 21 ದಿನಗಳ ಉಪವಾಸದಿಂದ ಸೋನಮ್ ವಾಂಗ್ಚುಕ್ ಅವರ ತೂಕ 8 ಕೆಜಿಗೂ ಹೆಚ್ಚು ಇಳಿಕೆಯಾಗಿದೆ. ರಕ್ತದಲ್ಲಿನ ಸಕ್ಕರೆಯ ಪ್ರಮಾಣ ಕಡಿಮೆಯಾಗಿದ್ದು, ನಿರ್ಜಲೀಕರಣದ ಸಮಸ್ಯೆಯೂ ಕಾಣಿಸಿಕೊಂಡಿದೆ.

ಇತ್ತ ಪ್ರತಿಪಕ್ಷ ನಾಯಕರು ರಾಹುಲ್ ಗಾಂಧಿ, ಅರವಿಂದ್ ಕೇಜ್ರಿವಾಲ್ ಸೇರಿದಂತೆ ಹಲವು ರಾಜಕೀಯ ಮುಖಂಡರು ಸೋನಮ್ ವಾಂಗ್ಚುಕ್ ಅವರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಸಂಸತ್ತಿನ ಮುಂಗಾರು ಅಧಿವೇಶನದಲ್ಲೂ ಈ ವಿಷಯ ಪ್ರಮುಖ ಚರ್ಚೆಗೆ ಗ್ರಾಸವಾಗುವ ಸಾಧ್ಯತೆ ಇದೆ.

ತಂದೆ ಹೆಚ್.ಡಿ. ರೇವಣ್ಣ ಸಲಹೆಯಂತೆ ಪೆರೋಲ್ ಅರ್ಜಿ ಸಲ್ಲಿಸದ ಪ್ರಜ್ವಲ್: ಜೈಲಿನಿಂದಲೇ ಅಜ್ಜಿಯ ಅಂತ್ಯಕ್ರಿಯೆ ವೀಕ್ಷಣೆ!

ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಧರ್ಮಪತ್ನಿ ಚೆನ್ನಮ್ಮ ಅವರ ನಿಧನದ ಹಿನ್ನೆಲೆಯಲ್ಲಿ, ಜೈಲಿನಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಅಜ್ಜಿಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಪೆರೋಲ್ ಕೋರಿ ಯಾವುದೇ ಅರ್ಜಿ ಸಲ್ಲಿಸಿಲ್ಲ.

ಕುಟುಂಬದ ನಿರ್ಧಾರದಂತೆ ಹಾಗೂ ತಂದೆ ಹೆಚ್.ಡಿ. ರೇವಣ್ಣ ಅವರ ಸಲಹೆ ಮೇರೆಗೆ ಪೆರೋಲ್‌ಗೆ ಮನವಿ ಸಲ್ಲಿಸದ ಪ್ರಜ್ವಲ್ ರೇವಣ್ಣ ಅವರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದಲೇ ವಿಡಿಯೊ ಕಾನ್ಫರೆನ್ಸ್ ವ್ಯವಸ್ಥೆಯ ಮೂಲಕ ಅಂತ್ಯಕ್ರಿಯೆಯ ವಿಧಿವಿಧಾನಗಳನ್ನು ವೀಕ್ಷಿಸಲಿದ್ದಾರೆ.

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆ ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ ಈ ಸಂದರ್ಭದಲ್ಲಿ ಜೈಲಿನಿಂದ ಹೊರಬರುವುದು ಕುಟುಂಬಕ್ಕೆ ಹಾಗೂ ಸಾರ್ವಜನಿಕ ವಲಯದಲ್ಲಿ ಅನಗತ್ಯ ಚರ್ಚೆ ಮತ್ತು ಇರಿಸುಮುರಿಸಿಗೆ ಕಾರಣವಾಗಬಹುದು ಎಂಬ ಕಾರಣದಿಂದ ಪೆರೋಲ್‌ಗೆ ಅರ್ಜಿ ಸಲ್ಲಿಸದಿರಲು ನಿರ್ಧರಿಸಲಾಗಿದೆ ಎಂದು ತಿಳಿದುಬಂದಿದೆ.

ಸಾಮಾನ್ಯವಾಗಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗೆ ಪೆರೋಲ್ ದೊರೆಯಬೇಕಾದರೆ ಕನಿಷ್ಠ ಎರಡು ವರ್ಷಗಳ ಕಾಲ ಶಿಕ್ಷೆ ಅನುಭವಿಸಿರಬೇಕು. ಅಲ್ಲದೆ ಅತ್ಯಾಚಾರದಂತಹ ಗಂಭೀರ ಪ್ರಕರಣಗಳಲ್ಲಿ ಪೆರೋಲ್ ಅಥವಾ ತುರ್ತು ಜಾಮೀನು ಮಂಜೂರು ಆಗುವುದು ಅಪರೂಪವಾಗಿದ್ದು, ಅದಕ್ಕೆ ನ್ಯಾಯಾಲಯ ಹಾಗೂ ಜೈಲು ಆಡಳಿತದ ಅನುಮತಿ ಅಗತ್ಯವಾಗಿರುತ್ತದೆ.

ಈ ಕುರಿತು ಪ್ರತಿಕ್ರಿಯಿಸಿರುವ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮುಖ್ಯ ಅಧೀಕ್ಷಕ (ಎಸ್‌ಪಿ) ಅಂಶುಕುಮಾರ್, ಪ್ರಜ್ವಲ್ ರೇವಣ್ಣ ಅವರು ಇದುವರೆಗೆ ಪೆರೋಲ್ ಅಥವಾ ತಾತ್ಕಾಲಿಕ ಜಾಮೀನಿಗಾಗಿ ಯಾವುದೇ ಅರ್ಜಿ ಸಲ್ಲಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಅಂತ್ಯಕ್ರಿಯೆ ನಡೆಯುವ ಸ್ಥಳಕ್ಕೆ ತೆರಳಲು ಅವಕಾಶ ಇಲ್ಲದ ಕಾರಣ, ಮಾನವೀಯ ನೆಲೆಯಲ್ಲಿ ಜೈಲು ಆಡಳಿತ ಒದಗಿಸುವ ಟಿವಿ ಅಥವಾ ವಿಡಿಯೊ ಕಾನ್ಫರೆನ್ಸ್ ವ್ಯವಸ್ಥೆಯ ಮೂಲಕ ಅಂತಿಮ ವಿಧಿವಿಧಾನಗಳ ನೇರ ಪ್ರಸಾರವನ್ನು ಪ್ರಜ್ವಲ್ ರೇವಣ್ಣ ವೀಕ್ಷಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

UGCET ಅರ್ಜಿ ಸಲ್ಲಿಸದ NEET ಅಭ್ಯರ್ಥಿಗಳಿಗೆ ಸುವರ್ಣಾವಕಾಶ; ಹೊರರಾಜ್ಯದ ವಿದ್ಯಾರ್ಥಿಗಳಿಗೂ ಕೆಇಎ ಮಹತ್ವದ ಸೂಚನೆ

ಬೆಂಗಳೂರು: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (NEET)ಯಲ್ಲಿ ಅರ್ಹತೆ ಪಡೆದಿದ್ದರೂ ಇದುವರೆಗೆ ಯುಜಿಸಿಇಟಿ (UGCET)ಗೆ ಅರ್ಜಿ ಸಲ್ಲಿಸದ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಮತ್ತೊಂದು ಅವಕಾಶ ಕಲ್ಪಿಸಿದೆ. ಇಂತಹ ಅಭ್ಯರ್ಥಿಗಳಿಗಾಗಿ ಹೊಸ ಅರ್ಜಿ ಸಲ್ಲಿಕೆ ಲಿಂಕ್ ಬಿಡುಗಡೆ ಮಾಡಲಾಗಿದ್ದು, ಜುಲೈ 24ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ಈವರೆಗೆ ಯುಜಿಸಿಇಟಿ ಅರ್ಜಿ ಸಲ್ಲಿಸದ ಅಭ್ಯರ್ಥಿಗಳು ಕೆಇಎ ಬಿಡುಗಡೆ ಮಾಡಿರುವ ಹೊಸ ಲಿಂಕ್ ಮೂಲಕ ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬಹುದು. ಜೊತೆಗೆ, ಈಗಾಗಲೇ ಯುಜಿಸಿಇಟಿ ಅರ್ಜಿ ಸಲ್ಲಿಸಿರುವ ಹಾಗೂ NEET ಮೂಲಕ ವೈದ್ಯಕೀಯ ಪ್ರವೇಶಕ್ಕೆ ಅರ್ಹತೆ ಪಡೆದ ಅಭ್ಯರ್ಥಿಗಳಿಗೆ ತಮ್ಮ NEET ರೋಲ್ ನಂಬರ್ ಅನ್ನು ಯುಜಿಸಿಇಟಿ ಅರ್ಜಿಗೆ ಲಿಂಕ್ ಮಾಡಲು ಪ್ರತ್ಯೇಕ ಲಿಂಕ್ ಅನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುತ್ತದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.

ವೈದ್ಯಕೀಯ, ದಂತ ವೈದ್ಯಕೀಯ, ಆಯುರ್ವೇದ, ಯುನಾನಿ ಹಾಗೂ ಹೋಮಿಯೋಪತಿ ಕೋರ್ಸ್‌ಗಳ ಪ್ರವೇಶಾತಿ ಸಂಪೂರ್ಣವಾಗಿ NEET ರ್ಯಾಂಕ್ ಆಧಾರದಲ್ಲೇ ನಡೆಯಲಿದೆ. ಹೊಸದಾಗಿ ನೋಂದಾಯಿಸಿಕೊಳ್ಳುವ ಅಭ್ಯರ್ಥಿಗಳ ದಾಖಲಾತಿ ಪರಿಶೀಲನೆ ಕುರಿತ ಸಂಪೂರ್ಣ ವೇಳಾಪಟ್ಟಿ ಮತ್ತು ಮಾರ್ಗಸೂಚಿಗಳನ್ನು ಕೆಇಎ ಶೀಘ್ರದಲ್ಲೇ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಿದೆ.

ಹೊರರಾಜ್ಯದ ಅಭ್ಯರ್ಥಿಗಳಿಗೆ ವಿಶೇಷ ಸೂಚನೆ

ಕರ್ನಾಟಕೇತರ ಅಭ್ಯರ್ಥಿಗಳು ಕೂಡ ಕೆಇಎ ಪೋರ್ಟಲ್‌ನಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಕೊಂಡು, ನಿಗದಿತ ಅರ್ಜಿ ಶುಲ್ಕ ಪಾವತಿಸಬೇಕು. ಜೊತೆಗೆ ದ್ವಿತೀಯ ಪಿಯುಸಿ ಅಥವಾ ಹೈಯರ್ ಸೆಕೆಂಡರಿ ಪರೀಕ್ಷೆಯ ಅಂಕಗಳನ್ನು ದಾಖಲಿಸಿ, ಅಂಕಪಟ್ಟಿಯನ್ನು ಆನ್‌ಲೈನ್‌ನಲ್ಲಿ ಅಪ್‌ಲೋಡ್ ಮಾಡಬೇಕು. ಇಂತಹ ಅಭ್ಯರ್ಥಿಗಳಿಗೆ ಸಾಮಾನ್ಯವಾಗಿ ದಾಖಲಾತಿ ಪರಿಶೀಲನೆಗೆ ನೇರವಾಗಿ ಹಾಜರಾಗುವ ಅಗತ್ಯವಿರುವುದಿಲ್ಲ.

ಆದರೆ OCI, PIO, NRI, ವಿದೇಶಿ ನಾಗರಿಕರು, ಧಾರ್ಮಿಕ ಅಲ್ಪಸಂಖ್ಯಾತ ಕೋಟಾ, NRI ವಾರ್ಡ್ ಸೌಲಭ್ಯ ಹಾಗೂ ಸೇಂಟ್ ಜಾನ್ಸ್ ವೈದ್ಯಕೀಯ ಕಾಲೇಜಿನ ವಿಶೇಷ ಸೀಟುಗಳಿಗೆ ಅರ್ಹರಾಗಿರುವ ಅಭ್ಯರ್ಥಿಗಳು ಕಡ್ಡಾಯವಾಗಿ ಸ್ಲಾಟ್ ಬುಕ್ ಮಾಡಿಕೊಂಡು ನಿಗದಿತ ದಿನಾಂಕದಂದು ದಾಖಲಾತಿ ಪರಿಶೀಲನೆಗೆ ಹಾಜರಾಗಬೇಕಿದೆ. ಈ ಸಂಬಂಧದ ದಿನಾಂಕ ಮತ್ತು ವೇಳಾಪಟ್ಟಿಯನ್ನು ಕೆಇಎ ಮುಂದಿನ ದಿನಗಳಲ್ಲಿ ಪ್ರಕಟಿಸಲಿದೆ.

ಬೆಂಗಳೂರಿನಲ್ಲಿ ಮಿತಿಮೀರಿದ ಪುಂಡರ ಅಟ್ಟಹಾಸ: ಸಾಲ ನೀಡಲಿಲ್ಲವೆಂದು ಬೇಕರಿ ಮಾಲೀಕನ ಮೇಲೆ ಹಲ್ಲೆ, ಅಂಗಡಿಯ ವಸ್ತುಗಳು ಧ್ವಂಸ!

ಬೆಂಗಳೂರು: ಬೇಕರಿಯಲ್ಲಿ ಸಾಲ ನೀಡದ ಹಿನ್ನೆಲೆಯಲ್ಲಿ ಪುಂಡರ ಗುಂಪೊಂದು ಬೇಕರಿ ಮಾಲೀಕನ ಮೇಲೆ ಹಲ್ಲೆ ನಡೆಸಿ, ಅಂಗಡಿಯಲ್ಲಿದ್ದ ವಸ್ತುಗಳನ್ನು ಧ್ವಂಸಗೊಳಿಸಿರುವ ಘಟನೆ ಬೆಂಗಳೂರಿನ ಆರ್‌.ಟಿ. ನಗರದಲ್ಲಿ ನಡೆದಿದೆ.

ಆರ್‌.ಟಿ. ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಮಂಜುನಾಥ ಕಾಂಡಿಮೆಂಟ್ಸ್ನಲ್ಲಿ ಈ ಘಟನೆ ನಡೆದಿದ್ದು, ಬೇಕರಿ ಮಾಲೀಕ ಚಂದ್ರಶೇಖರ ಶೆಟ್ಟಿ ಅವರು ಹಲ್ಲೆಗೆ ಒಳಗಾಗಿದ್ದಾರೆ.

ಮಾಹಿತಿಯ ಪ್ರಕಾರ, ಕೆಲವರು ಬೇಕರಿಯಲ್ಲಿ ವಸ್ತುಗಳನ್ನು ಸಾಲಕ್ಕೆ ನೀಡುವಂತೆ ಕೇಳಿದ್ದಾರೆ ಎನ್ನಲಾಗಿದೆ. ಆದರೆ ಸಾಲ ನೀಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ಆರೋಪಿಗಳು ಆಕ್ರೋಶಗೊಂಡು ಮಾಲೀಕರೊಂದಿಗೆ ಜಗಳ ಆರಂಭಿಸಿದ್ದಾರೆ.

ಬಳಿಕ ಪುಂಡರು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಚಂದ್ರಶೇಖರ ಶೆಟ್ಟಿ ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಅಲ್ಲದೆ ಬೇಕರಿಯಲ್ಲಿದ್ದ ವಸ್ತುಗಳು ಹಾಗೂ ಸಾಮಗ್ರಿಗಳನ್ನು ಧ್ವಂಸಗೊಳಿಸಿ ನಷ್ಟ ಉಂಟುಮಾಡಿದ್ದಾರೆ ಎನ್ನಲಾಗಿದೆ.

ಘಟನೆಯಿಂದ ಬೇಕರಿ ಮಾಲೀಕರು ಆತಂಕಕ್ಕೊಳಗಾಗಿದ್ದು, ಈ ಸಂಬಂಧ ಆರ್‌.ಟಿ. ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ದೂರು ದಾಖಲಿಸಿಕೊಂಡಿರುವ ಪೊಲೀಸರು ಪ್ರಕರಣದ ತನಿಖೆ ಆರಂಭಿಸಿದ್ದಾರೆ. ಹಲ್ಲೆ ನಡೆಸಿದ ಆರೋಪಿಗಳ ಪತ್ತೆಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿದುಬಂದಿದೆ.

ನಗರದಲ್ಲಿ ವ್ಯಾಪಾರಿಗಳಿಗೆ ಬೆದರಿಕೆ ಹಾಕುವುದು ಹಾಗೂ ಪುಂಡಾಟಿಕೆ ನಡೆಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.