ಬೆಂಗಳೂರು: ಉನ್ನತ ಮಟ್ಟದ ಅಧಿಕಾರಿಗಳನ್ನು ನೇಮಕ ಮಾಡುವ ಜವಾಬ್ದಾರಿ ಹೊಂದಿರುವವರೇ ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಎನ್ನುವ ಆರೋಪಗಳು ಕೇಳಿಬಂದಿರುವುದು ಆತಂಕಕಾರಿ ಬೆಳವಣಿಗೆ ಎಂದು ಹೈಕೋರ್ಟ್ ಮೌಖಿಕವಾಗಿ ಕಳವಳ ವ್ಯಕ್ತಪಡಿಸಿದೆ. ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ)ದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರ ವಿರುದ್ಧದ ನೇಮಕಾತಿ ಅಕ್ರಮ ಪ್ರಕರಣದ ವಿಚಾರಣೆ ವೇಳೆ ನ್ಯಾಯಪೀಠ ತೀವ್ರ ಅಸಮಾಧಾನ ವ್ಯಕ್ತಪಡಿಸಿತು.
ಬಂಧನ ಭೀತಿಯಲ್ಲಿರುವ ಶಿವಶಂಕರಪ್ಪ ಸಾಹುಕಾರ್ ಅವರು ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರ ಏಕಸದಸ್ಯ ಪೀಠ ನಡೆಸಿತು.
ವಿಚಾರಣೆ ವೇಳೆ, “ನೇಮಕಾತಿ ಸಂಸ್ಥೆಯ ಮುಖ್ಯಸ್ಥರಾಗಿದ್ದು, ಸಾಂವಿಧಾನಿಕ ಹುದ್ದೆಯಲ್ಲಿರುವವರು ನೇಮಕಾತಿಗೆ ಸಂಬಂಧಿಸಿದ ವಂಚನೆಯಲ್ಲಿ ಹೇಗೆ ಭಾಗಿಯಾಗಲು ಸಾಧ್ಯ? ಭವಿಷ್ಯದ ಆಡಳಿತಗಾರರನ್ನು ನೇಮಕ ಮಾಡುವ ಹುದ್ದೆಯಲ್ಲಿದ್ದ ನೀವು ಇಂತಹ ಕೃತ್ಯದಲ್ಲಿ ಭಾಗಿಯಾಗಿದ್ದರೆ, ಭವಿಷ್ಯದಲ್ಲಿ ಯಾವ ರೀತಿಯ ಸಮಾಜವನ್ನು ನಿರೀಕ್ಷಿಸಲು ಸಾಧ್ಯ?” ಎಂದು ನ್ಯಾಯಪೀಠ ಪ್ರಶ್ನಿಸಿತು.
ಈ ವೇಳೆ ಸರ್ಕಾರದ ಪರ ವಕೀಲರು ಕೆಲವು ದಾಖಲೆಗಳನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಿದರು. ದಾಖಲೆಗಳನ್ನು ಪರಿಶೀಲಿಸಿದ ಬಳಿಕ ಪೀಠ, ಪ್ರಕರಣದಲ್ಲಿ ಸಾಹುಕಾರ್ ಅವರ ಪಾತ್ರವೂ ಪತ್ತೆಯಾಗಿರುವುದಾಗಿ ಸೂಚಿಸಿತು. ಅಲ್ಲದೆ, ಅವರ ಪುತ್ರಿಯ ನೇಮಕಾತಿಗೆ ಸಂಬಂಧಿಸಿದ ಕೆಲವು ವಾಸ್ತವಿಕ ಅಂಶಗಳನ್ನು ಅವರು ಮರೆಮಾಚಿದ್ದಾರೆ ಎಂದು ನ್ಯಾಯಾಲಯದ ಗಮನಕ್ಕೆ ಬಂದಿರುವುದಾಗಿ ಹೇಳಿತು.
ಮುಚ್ಚಿದ ಲಕೋಟೆಯಲ್ಲಿರುವ ದಾಖಲೆಗಳು ಗೌಪ್ಯ ಸ್ವರೂಪದ್ದಾಗಿದ್ದು, ಅದರಲ್ಲಿರುವ ಮಾಹಿತಿಯನ್ನು ಈ ಹಂತದಲ್ಲಿ ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ನ್ಯಾಯಪೀಠ ತಿಳಿಸಿತು.
ಇದಕ್ಕೆ ಪ್ರತಿಯಾಗಿ ಸಾಹುಕಾರ್ ಪರ ವಾದ ಮಂಡಿಸಿದ ಹಿರಿಯ ವಕೀಲ ಎಂ. ಅರುಣ್ ಶ್ಯಾಮ್, ಕೆಪಿಎಸ್ಸಿ ಪರೀಕ್ಷಾ ನಿಯಂತ್ರಕರು ಹಾಗೂ ಪರೀಕ್ಷಾ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆರೋಪಗಳು ಕೇಳಿಬಂದಿವೆ ಎಂದು ತಿಳಿಸಿದರು. ಪ್ರಶ್ನೆಪತ್ರಿಕೆ, ಉತ್ತರ ಪತ್ರಿಕೆಗಳ ಪರಿಶೀಲನೆ ಹಾಗೂ ಅಂಕ ನಿಗದಿ ಸೇರಿದಂತೆ ಪರೀಕ್ಷಾ ಪ್ರಕ್ರಿಯೆಯ ಹಲವು ವಿಚಾರಗಳು ಪರೀಕ್ಷಾ ನಿಯಂತ್ರಕರ ವ್ಯಾಪ್ತಿಗೆ ಬರುತ್ತವೆ ಎಂದು ವಾದಿಸಿದರು.
ಈಗಾಗಲೇ ಶಿವಶಂಕರಪ್ಪ ಸಾಹುಕಾರ್ ಅವರನ್ನು ಅಮಾನತುಗೊಳಿಸಲಾಗಿದ್ದು, ಕೆಪಿಎಸ್ಸಿ ಕಚೇರಿಗೆ ಪ್ರವೇಶವನ್ನೂ ನಿರಾಕರಿಸಲಾಗಿದೆ ಎಂದು ಅವರ ಪರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದರು.
ಸಾಹುಕಾರ್ ಅವರ ಪುತ್ರಿ ಕೆಪಿಎಸ್ಸಿ ಪರೀಕ್ಷೆಗೆ ಹಾಜರಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ, ಕೆಪಿಎಸ್ಸಿ ಕಾಯಿದೆ, ನಿಯಮಗಳು ಅಥವಾ ಕೈಪಿಡಿಯಲ್ಲಿ ಆಯೋಗದ ಆಡಳಿತಗಾರರ ಪುತ್ರಿ ಪರೀಕ್ಷೆಗೆ ಹಾಜರಾಗಬಾರದು ಎಂಬ ನಿರ್ಬಂಧವಿಲ್ಲ ಎಂದು ವಕೀಲರು ವಾದಿಸಿದರು. ಈ ವಿಚಾರವನ್ನು ಸಂದರ್ಶನದ ಸಂದರ್ಭದಲ್ಲಿ ಬಹಿರಂಗಪಡಿಸುವ ಅಗತ್ಯವಿದೆ ಎಂದು ತಿಳಿಸಿದರು.
ಜಾರಿ ನಿರ್ದೇಶನಾಲಯದ ಶೋಧ ಕಾರ್ಯಾಚರಣೆ ವೇಳೆ ಸಾಹುಕಾರ್ ಅವರ ಮನೆಯಲ್ಲಿ ಯಾವುದೇ ಆಕ್ಷೇಪಾರ್ಹ ದಾಖಲೆಗಳು ಪತ್ತೆಯಾಗಿಲ್ಲ ಎಂದೂ ಅವರ ಪರ ವಕೀಲರು ವಾದಿಸಿದರು.
ಇನ್ನು, ಸಿಐಡಿ ಅಧಿಕಾರಿಗಳು ಮಧ್ಯಾಹ್ನ 1 ಗಂಟೆಗೆ ನೋಟಿಸ್ ನೀಡಿ, ಅದೇ ದಿನ ಸಂಜೆ 4 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. ನ್ಯಾಯಾಲಯ ವಿಧಿಸುವ ಯಾವುದೇ ಷರತ್ತಿಗೆ ಬದ್ಧರಾಗಿ ತನಿಖೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ಸಾಹುಕಾರ್ ತಿಳಿಸಿದ್ದಾರೆ. ಹೀಗಾಗಿ ಅವರಿಗೆ ಬಂಧನದಿಂದ ರಕ್ಷಣೆ ನೀಡಬೇಕು ಎಂದು ವಕೀಲರು ಮನವಿ ಮಾಡಿದರು.
ಆದರೆ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸರ್ಕಾರಿ ವಕೀಲರು, ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿರುವ ಮಧ್ಯಂತರ ಅರ್ಜಿಯಲ್ಲಿ ನ್ಯಾಯಾಲಯ ತನ್ನ ವಿಶೇಷಾಧಿಕಾರವನ್ನು ಬಳಸಬಾರದು. ಅರ್ಜಿದಾರರಿಗೆ ಯಾವುದೇ ಮಧ್ಯಂತರ ಪರಿಹಾರ ನೀಡಬಾರದು ಎಂದು ಮನವಿ ಮಾಡಿದರು.
ಎರಡೂ ಕಡೆಯ ವಾದ ಆಲಿಸಿದ ನ್ಯಾಯಪೀಠ, ನಿರೀಕ್ಷಣಾ ಜಾಮೀನು ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ಸರ್ಕಾರಕ್ಕೆ ಕಾಲಾವಕಾಶ ನೀಡಿತು. ಬಳಿಕ ಅರ್ಜಿಯ ವಿಚಾರಣೆಯನ್ನು ಮುಂದೂಡಿತು.
ಪ್ರಕರಣದ ಹಿನ್ನೆಲೆ
ಕೆಪಿಎಸ್ಸಿಯ ಪಶುವೈದ್ಯಾಧಿಕಾರಿ ಹುದ್ದೆಗಳು ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದಂತೆ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಶಿವಶಂಕರಪ್ಪ ಸಾಹುಕಾರ್ ಸೇರಿದಂತೆ ಇತರರ ವಿರುದ್ಧ ಪ್ರಕರಣ ದಾಖಲಾಗಿದೆ.
ಭಾರತೀಯ ನ್ಯಾಯ ಸಂಹಿತೆ (ಬಿಎನ್ಎಸ್) ಸೆಕ್ಷನ್ 318(3) ಹಾಗೂ ಕರ್ನಾಟಕ ಸರ್ಕಾರಿ ಪರೀಕ್ಷೆಗಳ (ಭ್ರಷ್ಟಾಚಾರ ನಿಷೇಧ ಮತ್ತು ಅಕ್ರಮ ನೇಮಕಾತಿ) ತಡೆ ಕಾಯ್ದೆಯ ಸೆಕ್ಷನ್ 10ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ಸಾಹುಕಾರ್, ಬಂಧನದಿಂದ ರಕ್ಷಣೆ ಕೋರಿ ಹೈಕೋರ್ಟ್ನಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.