ಮುಂಬೈ: ಮುಂಬೈನ ಪೈಧೋನಿ ಪ್ರದೇಶದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದ್ದು, ಒಂದೇ ಕುಟುಂಬದ ನಾಲ್ವರು ಫುಡ್ ಪಾಯಿಸನ್ನಿಂದ ಸಾವನ್ನಪ್ಪಿದ್ದಾರೆ.
ಮೃತರನ್ನು ಅಬ್ದುಲ್ಲಾ ದೋಕಾಡಿಯಾ (40), ನಸ್ರೀನ್ ದೋಕಾಡಿಯಾ (35) ಹಾಗೂ ಅವರ ಪುತ್ರಿಯರಾದ ಆಯಿಷಾ (16) ಮತ್ತು ಜೈನಾಬ್ (13) ಎಂದು ಗುರುತಿಸಲಾಗಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಏಪ್ರಿಲ್ 25ರ ರಾತ್ರಿ ಸುಮಾರು 10:30ಕ್ಕೆ ಕುಟುಂಬದ ಸದಸ್ಯರು ಸಂಬಂಧಿಕರೊಂದಿಗೆ ಒಟ್ಟಿಗೆ ಬಿರಿಯಾನಿ ಸೇವಿಸಿದ್ದರು. ಬಳಿಕ ಸಂಬಂಧಿಕರು ತಮ್ಮ ಮನೆಗಳಿಗೆ ತೆರಳಿದ್ದು, ಕುಟುಂಬದವರು ಮಾತ್ರ ಮನೆಯಲ್ಲಿ ಉಳಿದಿದ್ದರು.
ನಡುರಾತ್ರಿ ಸುಮಾರು 1:00 ರಿಂದ 1:30ರ ನಡುವೆ ನಾಲ್ವರು ಸದಸ್ಯರು ಕಲ್ಲಂಗಡಿ ಹಣ್ಣು ಸೇವಿಸಿದ್ದಾಗಿ ತಿಳಿದುಬಂದಿದೆ. ನಂತರ ಮುಂಜಾನೆ 5:30 ರಿಂದ 6:00ರ ನಡುವೆ ಅವರಿಗೆ ತೀವ್ರ ವಾಂತಿ ಹಾಗೂ ಹೊಟ್ಟೆ ನೋವು ಕಾಣಿಸಿಕೊಂಡಿದೆ.
ಆರಂಭದಲ್ಲಿ ಕುಟುಂಬ ವೈದ್ಯರಿಂದ ಚಿಕಿತ್ಸೆ ನೀಡಲಾಗಿದ್ದರೂ, ಸ್ಥಿತಿ ಗಂಭೀರವಾಗಿದ್ದರಿಂದ ಅವರನ್ನು ತಕ್ಷಣ ಮುಂಬೈನ ಜೆಜೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಾಲ್ವರೂ ಮೃತಪಟ್ಟಿದ್ದಾರೆ.
ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಸಾವಿನ ನಿಖರ ಕಾರಣ ವರದಿ ಬಂದ ಬಳಿಕ ತಿಳಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ಈ ಸಂಬಂಧ ಆಕಸ್ಮಿಕ ಸಾವು ಪ್ರಕರಣ ದಾಖಲಾಗಿದೆ.
ಈ ದುರಂತ ಘಟನೆಯಿಂದ ಸ್ಥಳೀಯರಲ್ಲಿ ಆಘಾತ ವ್ಯಕ್ತವಾಗಿದ್ದು, ಫುಡ್ ಪಾಯಿಸನ್ ಸಾಧ್ಯತೆ ಬಗ್ಗೆ ತನಿಖೆ ಮುಂದುವರಿದಿದೆ.

