ವಿಜಯಸಾಕ್ಷಿ ಸುದ್ದಿ, ಗದಗ: ಕನ್ನಡ ನಾಡು-ನುಡಿಗೆ ರಂಗಭೂಮಿಯ ಕೊಡುಗೆ ಅಪಾರವಾಗಿದ್ದು, ನಾಟಕಗಳು ಸಮಾಜದ ಸಮಸ್ಯೆಗಳನ್ನು ಜನರ ಮುಂದಿಟ್ಟು ಜಾಗೃತಿ ಮೂಡಿಸುವ ಪರಿಣಾಮಕಾರಿ ಮಾಧ್ಯಮವಾಗಿವೆ ಎಂದು ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ಹೇಳಿದರು.
ಲಿಂಗಾಯತ ಪ್ರಗತಿಶೀಲ ಸಂಘದ 2806ನೇ ಶಿವಾನುಭವ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ಅವರು, ಮನುಷ್ಯ ಸಮಾಜ ಜೀವಿಯಾಗಿದ್ದು, ಬದುಕಿನ ನೈಜ ಸತ್ಯಗಳನ್ನು ಹಾಗೂ ಸವಾಲುಗಳನ್ನು ನಾಟಕಗಳಂತಹ ರಂಗಪ್ರದರ್ಶನಗಳ ಮೂಲಕ ಪರಿಣಾಮಕಾರಿಯಾಗಿ ಅನಾವರಣಗೊಳಿಸಬಹುದು. ಮನುಷ್ಯನ ಭಾವನೆಗಳ ಅಭಿವ್ಯಕ್ತಿಗೆ ರಂಗಭೂಮಿ ಅತ್ಯಂತ ಅಗತ್ಯವಾಗಿದೆ ಎಂದು ಹೇಳಿದರು.
‘ರಂಗಭೂಮಿ ಮಹತ್ವ’ ಕುರಿತು ಉಪನ್ಯಾಸ ನೀಡಿದ ಗಣೇಶ ಅಮೀನಗಡದ, ಸಾಹಿತ್ಯ, ಸಂಗೀತ, ನಾಟಕ ಹಾಗೂ ವಚನಗಳು ಮನಸ್ಸಿಗೆ ನೆಮ್ಮದಿ ನೀಡುವುದರ ಜೊತೆಗೆ ಉತ್ತಮ ಜೀವನ ಮೌಲ್ಯಗಳನ್ನು ಬೆಳೆಸುತ್ತವೆ ಎಂದರು. ಗದಗ ನಗರವು ಸಂಗೀತ ಮತ್ತು ರಂಗಭೂಮಿ ಕ್ಷೇತ್ರಕ್ಕೆ ನೀಡಿರುವ ಕೊಡುಗೆ ಅಪಾರವಾಗಿದೆ. ಪಾಲಕರು ಮಕ್ಕಳನ್ನು ಮೊಬೈಲ್ನಿಂದ ದೂರವಿಟ್ಟು ಸಾಹಿತ್ಯ, ಸಂಗೀತ ಮತ್ತು ನಾಟಕಗಳತ್ತ ಒಲವು ಬೆಳೆಸಬೇಕು ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಮೈಸೂರಿನ ಕವಿತಾ ಕಲಾ ತಂಡದಿಂದ ‘ಕೌದಿ’ ನಾಟಕ ಪ್ರದರ್ಶನ ನಡೆಯಿತು.
ಕಾರ್ಯಕ್ರಮದಲ್ಲಿ ಮಾಜಿ ಅಧ್ಯಕ್ಷ ಸಿದ್ಧಣ್ಣ ಬಂಗಾರಶೆಟ್ಟರ ದಂಪತಿ ಹಾಗೂ ರೋಟರಿ ಮತ್ತು ಲಯನ್ಸ್ ಸಂಸ್ಥೆಗಳ ನೂತನ ಅಧ್ಯಕ್ಷರಾದ ಡಾ. ಪಿ.ಎಸ್. ಉಗಲಾಟ (ರೋಟರಿ ಗದಗ-ಬೆಟಗೇರಿ), ಮಲ್ಲಿಕಾರ್ಜುನ ಸಿ. ಚಂದಪ್ಪನವರ (ರೋಟರಿ ಗದಗ ಸೆಂಟ್ರಲ್) ಮತ್ತು ಪ್ರವೀಣ್ ವಾರಕರ (ಲಯನ್ಸ್ ಸಂಸ್ಥೆ, ಗದಗ) ಅವರನ್ನು ಸನ್ಮಾನಿಸಲಾಯಿತು.
ವಚನ ಸಂಗೀತವನ್ನು ಮೃತ್ಯುಂಜಯ ಹಿರೇಮಠ ಹಾಗೂ ಗುರುನಾಥ ಸುತಾರ ಪ್ರಸ್ತುತಪಡಿಸಿದರು. ಧರ್ಮಗ್ರಂಥ ಪಠಣವನ್ನು ದೀಕ್ಷಾ ಸಂಗನಾಯ್ಕರ, ವಚನ ಚಿಂತನವನ್ನು ಪ್ರತೀಕ್ಷಾ ಮಹಾಂತೇಶ ಪೂಜಾರ ನಡೆಸಿಕೊಟ್ಟರು. ದಾಸೋಹ ಸೇವೆಯನ್ನು ಡಾ. ಜಿ.ಬಿ. ಪಾಟೀಲ ಮತ್ತು ಕುಟುಂಬದವರು ವಹಿಸಿಕೊಂಡಿದ್ದರು.
ಲಿಂಗಾಯತ ಪ್ರಗತಿಶೀಲ ಸಂಘದ ಅಧ್ಯಕ್ಷ ಡಾ. ಉಮೇಶ ಪುರದ ಸ್ವಾಗತಿಸಿದರು. ರಮೇಶ ಕಲ್ಲನಗೌಡರ ಹಾಗೂ ವಿದ್ಯಾ ಗಂಜಿಹಾಳ ಕಾರ್ಯಕ್ರಮ ನಿರೂಪಿಸಿದರು. ಉಪಾಧ್ಯಕ್ಷ ಪ್ರಭು ಗಂಜಿಹಾಳ, ಸುರೇಖಾ ಪಿಳ್ಳಿ, ಕಾರ್ಯದರ್ಶಿ ಸಿದ್ಧರಾಮ ಪಟ್ಟೇದ, ಸಹಕಾರ್ಯದರ್ಶಿ ಪ್ರತಿಭಾ ಬಡ್ನಿ, ಕೋಶಾಧ್ಯಕ್ಷ ವೀರಣ್ಣ ಗೋಟಡಕಿ, ಕೆ.ಎಸ್. ಕೋರಿಮಠ, ಸೋಮಶೇಖರ ಪುರಾಣಿಮಠ, ಆದೇಶ ಅಂಗಡಿ ಸೇರಿದಂತೆ ಸಂಘದ ಪದಾಧಿಕಾರಿಗಳು ಹಾಗೂ ಭಕ್ತರು ಉಪಸ್ಥಿತರಿದ್ದರು.
“ಸಮಾಜದಲ್ಲಿರುವ ಸಮಸ್ಯೆಗಳ ಕುರಿತು ಜನರಲ್ಲಿ ಅರಿವು ಮೂಡಿಸುವ ಶಕ್ತಿಯೇ ರಂಗಭೂಮಿಯದು. ಕನ್ನಡ ನಾಡು-ನುಡಿಯನ್ನು ಶ್ರೀಮಂತಗೊಳಿಸುವಲ್ಲಿ ರಂಗಭೂಮಿಯ ಪಾತ್ರ ಅನನ್ಯವಾಗಿದೆ.”
– ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು

