ಯಾದಗಿರಿ: ಮಳೆಗಾಲದಲ್ಲಿ ಪ್ರವಾಹದ ಅಬ್ಬರದಿಂದ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದ ಕೃಷ್ಣಾ ನದಿ, ಇದೀಗ ಬೇಸಿಗೆಯ ತೀವ್ರ ಬಿಸಿಲಿನಿಂದ ಸಂಪೂರ್ಣ ಬರಿದಾಗಿರುವ ದೃಶ್ಯ ಯಾದಗಿರಿ ಜಿಲ್ಲೆಯಲ್ಲಿ ಆತಂಕ ಮೂಡಿಸಿದೆ.
ಜಿಲ್ಲೆಯ ರೈತರ ಜೀವನಾಡಿಯಾಗಿರುವ ಕೃಷ್ಣಾ ನದಿ ನೀರಿನ ಕೊರತೆಯಿಂದ ಒಣಗಿದ್ದು, ರೈತರು ಹಾಗೂ ಸ್ಥಳೀಯರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಸುರಪುರ ತಾಲೂಕಿನ ತಿಂಥಣಿ ಗ್ರಾಮದಲ್ಲಿರುವ ಮೌನೇಶ್ವರ ದೇಗುಲ ‘ದಕ್ಷಿಣ ಕಾಶಿ’ ಎಂದೇ ಪ್ರಸಿದ್ಧಿ ಪಡೆದಿದೆ. ಕೃಷ್ಣಾ ನದಿ ತೀರದಲ್ಲಿರುವ ಈ ದೇವಸ್ಥಾನಕ್ಕೆ ಪ್ರತಿನಿತ್ಯ ಅನೇಕ ಭಕ್ತರು ಆಗಮಿಸಿ, ನದಿಯಲ್ಲಿ ಪುಣ್ಯಸ್ನಾನ ಮಾಡಿ ಬಳಿಕ ದೇವರ ದರ್ಶನ ಪಡೆಯುವುದು ಸಂಪ್ರದಾಯವಾಗಿದೆ.
ಆದರೆ ಇದೀಗ ನದಿ ಬತ್ತಿಹೋಗಿರುವುದರಿಂದ ಭಕ್ತರು ಪುಣ್ಯಸ್ನಾನ ಮಾಡಲು ಸಾಧ್ಯವಾಗದೇ ಪರದಾಡುವಂತಾಗಿದೆ.
ನದಿಯಲ್ಲಿ ನೀರಿನ ಮಟ್ಟ ಕುಸಿದ ಪರಿಣಾಮ ಮೀನುಗಳ ಸಂಖ್ಯೆಯೂ ಕಡಿಮೆಯಾಗಿದ್ದು, ಇದರಿಂದ ಪಕ್ಷಿಗಳಿಗೆ ಆಹಾರದ ಕೊರತೆ ಎದುರಾಗಿದೆ. ಜೊತೆಗೆ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯೂ ತೀವ್ರಗೊಂಡಿದೆ.
ಈ ಹಿನ್ನೆಲೆಯಲ್ಲಿ ಕೃಷ್ಣಾ ನದಿಗೆ ತಕ್ಷಣ ನೀರು ಹರಿಸುವಂತೆ ಸ್ಥಳೀಯರು ಹಾಗೂ ಭಕ್ತರು ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಪ್ರವಾಹದ ಅಬ್ಬರದಿಂದ ಹೆಸರುವಾಸಿಯಾಗಿದ್ದ ಕೃಷ್ಣಾ ನದಿ ಇಂದು ಬರಿದಾದ ಸ್ಥಿತಿಯಲ್ಲಿ ಕಾಣಿಸಿಕೊಳ್ಳುತ್ತಿರುವುದು ಪರಿಸರ ಪ್ರೇಮಿಗಳಲ್ಲೂ ಆತಂಕ ಮೂಡಿಸಿದೆ.

