Home Blog

ನೀಟ್ ಪ್ರತಿಭಟನೆಗೆ ವಿದ್ಯಾರ್ಥಿಗಳನ್ನು ರಾಜಕೀಯ ದಾಳವಾಗಿ ಕಾಂಗ್ರೆಸ್ ಬಳಸುತ್ತಿದೆ: ರಾಹುಲ್ ಗಾಂಧಿ ವಿರುದ್ಧ ಧರ್ಮೇಂದ್ರ ಪ್ರಧಾನ್ ವಾಗ್ದಾಳಿ

0

ನವದೆಹಲಿ: ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗಳ ವಿಚಾರದಲ್ಲಿ ಕಾಂಗ್ರೆಸ್ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ವಿದ್ಯಾರ್ಥಿಗಳನ್ನು ರಾಜಕೀಯ ಉದ್ದೇಶಕ್ಕಾಗಿ ಬಳಸಿಕೊಳ್ಳಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಧರ್ಮೇಂದ್ರ ಪ್ರಧಾನ್, ಸಂಸತ್ತಿನ ಮುಂಗಾರು ಅಧಿವೇಶನದ ವೇಳೆ ಗೊಂದಲ ಸೃಷ್ಟಿಸುವ ಉದ್ದೇಶದಿಂದ ಕಾಂಗ್ರೆಸ್ ಹಾಗೂ ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ರಾಜಕೀಯ ದಾಳಗಳನ್ನಾಗಿ ಬಳಸುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

ಪ್ರಧಾನಿ ನಿವಾಸದ ಎದುರು ನಡೆದ ಧರಣಿ ಪ್ರತಿಭಟನೆಯಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗಿದ್ದು, ಭದ್ರತಾ ನಿಯಮಗಳನ್ನೂ ಉಲ್ಲಂಘಿಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ. ಸರ್ಕಾರ ಸಮಗ್ರ ಚರ್ಚೆಗೆ ಸಿದ್ಧವಿದೆ ಎಂದು ಸ್ಪಷ್ಟಪಡಿಸಿದ ಬಳಿಕವೂ, ಕಾಂಗ್ರೆಸ್ ಪ್ರಜಾಸತ್ತಾತ್ಮಕ ಚರ್ಚೆಗಿಂತ ರಾಜಕೀಯ ಪ್ರದರ್ಶನಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದೆ ಎಂದು ಪ್ರಧಾನ್ ಹೇಳಿದ್ದಾರೆ.

ವಿದ್ಯಾರ್ಥಿಗಳ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವುದಕ್ಕಿಂತ ರಾಜಕೀಯ ಲಾಭಕ್ಕಾಗಿ ಗದ್ದಲ ಸೃಷ್ಟಿಸುವುದೇ ಕಾಂಗ್ರೆಸ್‌ನ ಉದ್ದೇಶ ಎಂದು ಆರೋಪಿಸಿದ ಅವರು, ನೀಟ್ ಪರೀಕ್ಷೆ ಕುರಿತ ಎಲ್ಲಾ ನ್ಯಾಯಸಮ್ಮತ ಕಳವಳಗಳನ್ನು ಸಂಸತ್ತಿನಲ್ಲೇ ಚರ್ಚಿಸಿ ಪರಿಹರಿಸಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.

ವಿದ್ಯಾರ್ಥಿಗಳು ಯಾವುದೇ ರಾಜಕೀಯ ಅಭಿಯಾನದ ಸಾಧನವಾಗಬಾರದು. ಅವರಿಗೆ ಘೋಷಣೆಗಳಿಗಿಂತ ಪರಿಹಾರ, ಗೊಂದಲಕ್ಕಿಂತ ಸ್ಪಷ್ಟತೆ ಹಾಗೂ ಅಡ್ಡಿಪಡಿಸುವಿಕೆಗಿಂತ ಜವಾಬ್ದಾರಿಯುತ ಆಡಳಿತ ಸಿಗಬೇಕು ಎಂದು ಅವರು ಹೇಳಿದ್ದಾರೆ.

ವಿದ್ಯಾರ್ಥಿಗಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಅಗತ್ಯ ಸುಧಾರಣೆಗಳು, ಹೊಣೆಗಾರಿಕೆ ಮತ್ತು ಪಾರದರ್ಶಕತೆಯನ್ನು ಖಚಿತಪಡಿಸಲು ಕೇಂದ್ರ ಸರ್ಕಾರ ಸಂಪೂರ್ಣ ಬದ್ಧವಾಗಿದೆ ಎಂದು ಧರ್ಮೇಂದ್ರ ಪ್ರಧಾನ್ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಮದುವೆ ಭರವಸೆ ನೀಡಿ ವಂಚನೆ ಆರೋಪ: PSI ವಿರುದ್ಧ ತನಿಖೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್

ಬೆಂಗಳೂರು: ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ಬಳಿಕ ವಂಚಿಸಿದ ಆರೋಪ ಎದುರಿಸುತ್ತಿರುವ ಶಿವಮೊಗ್ಗದ ತುಂಗಾನಗರ ಪೊಲೀಸ್ ಠಾಣೆಯ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ (ಪಿಎಸ್‌ಐ) ಗಾದಿಲಿಂಗಪ್ಪ ವಿರುದ್ಧದ ತನಿಖೆಯನ್ನು ಮುಂದುವರಿಸಲು ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿದೆ. ಆದರೆ, ಪ್ರಕರಣದಲ್ಲಿ ಆರೋಪಿಯಾಗಿದ್ದ ಪಿಎಸ್‌ಐ ಅವರ ತಾಯಿ ವಿರುದ್ಧದ ತನಿಖೆಗೆ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.

ಚಿತ್ರದುರ್ಗ ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ಪಿಎಸ್‌ಐ ಗಾದಿಲಿಂಗಪ್ಪ ಹಾಗೂ ಅವರ ತಾಯಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ನೀಡಿದೆ.

ನ್ಯಾಯಪೀಠವು, ಪಿಎಸ್‌ಐ ಅವರ ತಾಯಿ ವಿರುದ್ಧ ಮಾಡಿರುವ ಆರೋಪಗಳು ಪ್ರಾಥಮಿಕವಾಗಿ ಅಸಂಭವವಾಗಿರುವುದರಿಂದ ಅವರ ವಿರುದ್ಧದ ತನಿಖೆಗೆ ತಾತ್ಕಾಲಿಕ ತಡೆ ನೀಡಿದೆ. ಆದರೆ, ಮೊದಲನೇ ಆರೋಪಿಯಾಗಿರುವ ಪಿಎಸ್‌ಐ ವಿರುದ್ಧದ ಆರೋಪಗಳ ಕುರಿತು ತನಿಖೆಯನ್ನು ಪೊಲೀಸರು ಮುಂದುವರಿಸಬಹುದು ಎಂದು ಸ್ಪಷ್ಟಪಡಿಸಿದೆ.

ಇದಲ್ಲದೆ, ದೂರುದಾರರು ಈ ಹಿಂದೆ ದಾಖಲಿಸಿದ್ದ ಮೊದಲ ದೂರುವನ್ನು ಹಿಂಪಡೆದಿರುವುದನ್ನೇ ಆಧಾರವನ್ನಾಗಿ ಮಾಡಿಕೊಂಡು ತನಿಖೆ ಸ್ಥಗಿತಗೊಳಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ಪ್ರಕರಣದ ಹಿನ್ನೆಲೆ

ನ್ಯಾಯಾಲಯದ ಆದೇಶದ ಪ್ರಕಾರ, ದೂರುದಾರೆ ವಕೀಲರಾಗಿದ್ದು, ಪಿಎಸ್‌ಐ ಗಾದಿಲಿಂಗಪ್ಪ ಅವರೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಪರಿಚಯವಾಗಿದ್ದರು. ಬಳಿಕ ಇಬ್ಬರ ನಡುವೆ ಸಂದೇಶಗಳ ವಿನಿಮಯ ನಡೆದು ಸ್ನೇಹ ಪ್ರೀತಿಗೆ ತಿರುಗಿದೆ. ಈ ವೇಳೆ ಮದುವೆಯಾಗುವುದಾಗಿ ಭರವಸೆ ನೀಡಿ ದೈಹಿಕ ಸಂಪರ್ಕ ಬೆಳೆಸಿದ ನಂತರ ಮದುವೆಯಾಗದೆ ವಂಚಿಸಿದ್ದಾರೆ ಎಂದು ದೂರುದಾರೆ ಆರೋಪಿಸಿದ್ದಾರೆ.

ಈ ಸಂಬಂಧ ದೂರುದಾರರು ಮೊದಲಿಗೆ ಪಿಎಸ್‌ಐ ವಿರುದ್ಧ ದೂರು ದಾಖಲಿಸಿದ್ದರು. ಬಳಿಕ ಆ ದೂರುವನ್ನು ಹಿಂಪಡೆದ ಹಿನ್ನೆಲೆಯಲ್ಲಿ ಪೊಲೀಸರು ‘ಬಿ’ ವರದಿ ಸಲ್ಲಿಸಿದ್ದರು. ನಂತರ ಮತ್ತೊಮ್ಮೆ ದೂರು ದಾಖಲಿಸಿದ ಮಹಿಳೆ, ದೂರು ಹಿಂಪಡೆಯುವಂತೆ ತಮ್ಮ ಮೇಲೆ ಒತ್ತಡ ಹಾಗೂ ಬೆದರಿಕೆ ಹೇರಲಾಗಿತ್ತು ಎಂದು ಆರೋಪಿಸಿದ್ದರು.

ಈ ಎರಡನೇ ಎಫ್‌ಐಆರ್ ಅನ್ನು ರದ್ದುಪಡಿಸುವಂತೆ ಕೋರಿ ಪಿಎಸ್‌ಐ ಹಾಗೂ ಅವರ ತಾಯಿ ಹೈಕೋರ್ಟ್ ಮೊರೆ ಹೋಗಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ, ಪಿಎಸ್‌ಐ ವಿರುದ್ಧದ ತನಿಖೆ ಮುಂದುವರಿಸಲು ಅವಕಾಶ ನೀಡಿದ್ದು, ತಾಯಿ ವಿರುದ್ಧದ ತನಿಖೆಗೆ ಮಾತ್ರ ತಾತ್ಕಾಲಿಕ ತಡೆ ನೀಡಿದೆ.

ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಗೆ ಆಸ್ಟ್ರೇಲಿಯಾ ಬಲಿಷ್ಠ ತಂಡ ಪ್ರಕಟ; ಕಮ್ಮಿನ್ಸ್, ಹ್ಯಾಜಲ್ವುಡ್, ಲಿಯಾನ್ ತಂಡಕ್ಕೆ ವಾಪಸ್

0

ಬಾಂಗ್ಲಾದೇಶ ವಿರುದ್ಧ ಆಗಸ್ಟ್‌ನಲ್ಲಿ ನಡೆಯಲಿರುವ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿ 13 ಸದಸ್ಯರ ಬಲಿಷ್ಠ ತಂಡವನ್ನು ಪ್ರಕಟಿಸಿದೆ.

ಸರಣಿಯ ಮೊದಲ ಟೆಸ್ಟ್ ಡಾರ್ವಿನ್‌ನಲ್ಲಿ ಹಾಗೂ ಎರಡನೇ ಪಂದ್ಯ ಮೆಕೆ ನಗರದಲ್ಲಿ ನಡೆಯಲಿದೆ. ಈ ಸರಣಿಗೆ ನಾಯಕ ಪ್ಯಾಟ್ ಕಮ್ಮಿನ್ಸ್, ವೇಗಿ ಜೋಶ್ ಹ್ಯಾಜಲ್ವುಡ್ ಮತ್ತು ಅನುಭವಿ ಸ್ಪಿನ್ನರ್ ನಾಥನ್ ಲಿಯಾನ್ ಗಾಯದಿಂದ ಚೇತರಿಸಿಕೊಂಡು ತಂಡಕ್ಕೆ ಮರಳಿರುವುದು ಆಸ್ಟ್ರೇಲಿಯಾ ತಂಡಕ್ಕೆ ಮತ್ತಷ್ಟು ಬಲ ತುಂಬಿದೆ.

ಗಾಯದ ಕಾರಣದಿಂದ ಈ ಮೂವರು ಆಟಗಾರರು ಇತ್ತೀಚಿನ ಆಶಸ್ ಸರಣಿಯ ಸಿಡ್ನಿ ಟೆಸ್ಟ್‌ನಲ್ಲಿ ಆಡಲು ಸಾಧ್ಯವಾಗಿರಲಿಲ್ಲ. ಇದೀಗ ಅವರ ಮರಳುವಿಕೆಯಿಂದ ಕಳೆದ ಆಶಸ್ ಸರಣಿಯಲ್ಲಿ ಗಮನಾರ್ಹ ಪ್ರದರ್ಶನ ನೀಡಿದ್ದ ವೇಗಿ ಮೈಕೆಲ್ ನೆಸರ್‌ಗೆ ಮುಖ್ಯ ತಂಡದಲ್ಲಿ ಸ್ಥಾನ ಸಿಗಲಿಲ್ಲ. ಆದರೆ ಮೈಕೆಲ್ ನೆಸರ್, ಟಾಡ್ ಮರ್ಫಿ ಹಾಗೂ ಬ್ರೆಂಡನ್ ಡಾಗೆಟ್ ಅವರನ್ನು ಬ್ಯಾಕಪ್ ಆಟಗಾರರಾಗಿ ಆಯ್ಕೆ ಮಾಡಲಾಗಿದೆ.

ಉಸ್ಮಾನ್ ಖವಾಜಾ ನಿವೃತ್ತಿಯ ಬಳಿಕ ಆಸ್ಟ್ರೇಲಿಯಾ ತಂಡದಲ್ಲಿ ಬ್ಯಾಟಿಂಗ್ ಕ್ರಮದಲ್ಲಿ ಕೆಲವು ಬದಲಾವಣೆಗಳಾಗುವ ಸಾಧ್ಯತೆ ಇದೆ. ಕ್ಯಾಮರೂನ್ ಗ್ರೀನ್ ಅವರನ್ನು ಐದನೇ ಕ್ರಮಾಂಕದಲ್ಲಿ ಆಡಿಸುವ ನಿರೀಕ್ಷೆಯಿದ್ದು, ಜ್ಯಾಕ್ ವೆದರ್ಲ್ಯಾಂಡ್ ಹಾಗೂ ಟ್ರಾವಿಸ್ ಹೆಡ್ ಆರಂಭಿಕ ಬ್ಯಾಟರ್‌ಗಳಾಗಿ ಕಣಕ್ಕಿಳಿಯುವ ಸಾಧ್ಯತೆ ಇದೆ.

ಮಾರ್ನಸ್ ಲ್ಯಾಬುಶೇನ್ ಮತ್ತು ಸ್ಟೀವ್ ಸ್ಮಿತ್ ಕ್ರಮವಾಗಿ ಮೂರನೇ ಹಾಗೂ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವ ನಿರೀಕ್ಷೆಯಿದೆ. ಜೋಶ್ ಇಂಗ್ಲಿಸ್ ಅವರನ್ನು ಬ್ಯಾಕಪ್ ಬ್ಯಾಟರ್ ಹಾಗೂ ವಿಕೆಟ್‌ಕೀಪರ್ ಆಗಿ ತಂಡದಲ್ಲಿ ಸೇರಿಸಲಾಗಿದೆ.

ವೇಗಿ ಜೋಶ್ ಹ್ಯಾಜಲ್ವುಡ್ ತಂಡಕ್ಕೆ ಮರಳಿರುವುದರಿಂದ ಅಂತಿಮ ಪ್ಲೇಯಿಂಗ್ ಇಲೆವೆನ್ ಆಯ್ಕೆ ನಾಯಕ ಪ್ಯಾಟ್ ಕಮ್ಮಿನ್ಸ್‌ಗೆ ಸವಾಲಾಗುವ ಸಾಧ್ಯತೆಯಿದೆ. ಸ್ಕಾಟ್ ಬೋಲ್ಯಾಂಡ್ ಮತ್ತು ಮಿಚೆಲ್ ಸ್ಟಾರ್ಕ್ ಇಬ್ಬರೂ ಉತ್ತಮ ಫಾರ್ಮ್‌ನಲ್ಲಿದ್ದು, ವಿಶೇಷವಾಗಿ ಬೋಲ್ಯಾಂಡ್ ಇತ್ತೀಚಿನ ಪಂದ್ಯಗಳಲ್ಲಿ ನಿರಂತರವಾಗಿ ವಿಕೆಟ್‌ಗಳನ್ನು ಪಡೆಯುತ್ತಿದ್ದಾರೆ. ಹೀಗಾಗಿ ಹ್ಯಾಜಲ್ವುಡ್ ಮತ್ತು ಬೋಲ್ಯಾಂಡ್ ಅವರಲ್ಲಿ ಯಾರಿಗೆ ಅಂತಿಮ ತಂಡದಲ್ಲಿ ಅವಕಾಶ ಸಿಗಲಿದೆ ಎಂಬುದು ಕುತೂಹಲ ಮೂಡಿಸಿದೆ.

37 ವರ್ಷದ ಸ್ಕಾಟ್ ಬೋಲ್ಯಾಂಡ್ ಇದುವರೆಗೆ 19 ಟೆಸ್ಟ್ ಪಂದ್ಯಗಳಲ್ಲಿ 82 ವಿಕೆಟ್‌ಗಳನ್ನು ಕಬಳಿಸಿದ್ದು, ತಮ್ಮ ಸ್ಥಿರ ಪ್ರದರ್ಶನದಿಂದ ಗಮನ ಸೆಳೆದಿದ್ದಾರೆ. ಮತ್ತೊಂದೆಡೆ, ಮಂಡಿರಜ್ಜು ಗಾಯದಿಂದ ಆಶಸ್ ಸರಣಿಯಿಂದ ಹೊರಗುಳಿದಿದ್ದ ಜೋಶ್ ಹ್ಯಾಜಲ್ವುಡ್ ಇದೀಗ ಸಂಪೂರ್ಣ ಫಿಟ್ ಆಗಿದ್ದು ತಂಡಕ್ಕೆ ಮರಳಿದ್ದಾರೆ.

ಬೆನ್ನು ನೋವಿನ ಸಮಸ್ಯೆಯಿಂದ ಕಳೆದ ಕೆಲವು ತಿಂಗಳು ಸೀಮಿತ ಪಂದ್ಯಗಳನ್ನಷ್ಟೇ ಆಡಿದ್ದ ನಾಯಕ ಪ್ಯಾಟ್ ಕಮ್ಮಿನ್ಸ್ ಕೂಡ ಇದೀಗ ಪೂರ್ಣ ಫಿಟ್ ಆಗಿದ್ದಾರೆ. ಮಂಡಿರಜ್ಜು ಶಸ್ತ್ರಚಿಕಿತ್ಸೆಯ ಬಳಿಕ ನಾಥನ್ ಲಿಯಾನ್ ಕೂಡ ತಂಡ ಸೇರಿಕೊಂಡಿದ್ದಾರೆ.

ರಾಷ್ಟ್ರೀಯ ಆಯ್ಕೆ ಸಮಿತಿಯ ಅಧ್ಯಕ್ಷ ಜಾರ್ಜ್ ಬೈಲಿ, ಎಲ್ಲಾ ಆಟಗಾರರ ಫಿಟ್ನೆಸ್ ಮೇಲೆ ವೈದ್ಯಕೀಯ ತಂಡ ನಿರಂತರವಾಗಿ ನಿಗಾ ವಹಿಸಲಿದೆ ಎಂದು ತಿಳಿಸಿದ್ದಾರೆ.

ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಗೆ ಆಸ್ಟ್ರೇಲಿಯಾ ತಂಡ:

ಪ್ಯಾಟ್ ಕಮ್ಮಿನ್ಸ್ (ನಾಯಕ), ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ, ಕ್ಯಾಮರೂನ್ ಗ್ರೀನ್, ಜೋಶ್ ಹ್ಯಾಜಲ್ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಮಾರ್ನಸ್ ಲ್ಯಾಬುಶೇನ್, ನಾಥನ್ ಲಿಯಾನ್, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಜ್ಯಾಕ್ ವೆದರ್ಲ್ಯಾಂಡ್ ಹಾಗೂ ಬ್ಯೂ ವೆಬ್ಸ್ಟರ್.

ಸರಣಿಯ ವೇಳಾಪಟ್ಟಿ:

  • ಮೊದಲ ಟೆಸ್ಟ್: ಆಗಸ್ಟ್ 13 ರಿಂದ 17, 2026 – ಮರಾರಾ ಕ್ರಿಕೆಟ್ ಮೈದಾನ, ಡಾರ್ವಿನ್.
  • ಎರಡನೇ ಟೆಸ್ಟ್: ಆಗಸ್ಟ್ 22 ರಿಂದ 26, 2026 – ಗ್ರೇಟ್ ಬ್ಯಾರಿಯರ್ ರೀಫ್ ಅರೆನಾ, ಮೆಕೆ.

ಕ್ಯಾಲಿಫೋರ್ನಿಯಾದಲ್ಲಿ ಭೀಕರ ರಸ್ತೆ ಅಪಘಾತ: ಹೈದರಾಬಾದ್ ಮೂಲದ ಒಂದೇ ಕುಟುಂಬದ ಮೂವರು ಸಾವು, ಮತ್ತೋರ್ವ ಗಂಭೀರ

0

ವಾಷಿಂಗ್ಟನ್: ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಹೈದರಾಬಾದ್ ಮೂಲದ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದು, ಕುಟುಂಬದ ಮುಖ್ಯಸ್ಥ ಹಾಗೂ ಮತ್ತೊಬ್ಬ ಬಾಲಕಿ ಗಂಭೀರವಾಗಿ ಗಾಯಗೊಂಡಿರುವ ಹೃದಯವಿದ್ರಾವಕ ಘಟನೆ ನಡೆದಿದೆ.

ಹೈದರಾಬಾದ್‌ನ ಸೈದಾಬಾದ್ ನಿವಾಸಿ ಶೇಖ್ ನವೀದ್ ತಮ್ಮ ಪತ್ನಿ ಮತ್ತು ಇಬ್ಬರು ಮಕ್ಕಳೊಂದಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಮತ್ತೊಂದು ವಾಹನದೊಂದಿಗೆ ಭೀಕರವಾಗಿ ಡಿಕ್ಕಿ ಹೊಡೆದ ಪರಿಣಾಮ ದುರಂತ ಸಂಭವಿಸಿದೆ. ಅಪಘಾತದ ತೀವ್ರತೆಗೆ ನವೀದ್ ಅವರ ಪತ್ನಿ ನಾಜಿಯಾ ಸಲ್ಮಾ, ಪುತ್ರ ಹಾಗೂ ಪುತ್ರಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಶೇಖ್ ನವೀದ್ ಮತ್ತು ಅವರ ಕಿರಿಯ ಪುತ್ರಿಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇಬ್ಬರ ಆರೋಗ್ಯದ ಮೇಲೆ ವೈದ್ಯರು ನಿಗಾ ವಹಿಸಿದ್ದು, ಚಿಕಿತ್ಸೆ ಮುಂದುವರಿದಿದೆ.

ಸುಮಾರು ಹತ್ತು ವರ್ಷಗಳ ಹಿಂದೆ ಉದ್ಯೋಗ ನಿಮಿತ್ತ ಅಮೆರಿಕಕ್ಕೆ ತೆರಳಿದ್ದ ನವೀದ್ ಅಲ್ಲಿಯೇ ಕುಟುಂಬದೊಂದಿಗೆ ನೆಲೆಸಿದ್ದರು. ಮಗನಿಗೆ ಕರೆ ಮಾಡಿದ ವೇಳೆ ಅಮೆರಿಕದ ಪೊಲೀಸರಿಂದ ಅಪಘಾತದ ಮಾಹಿತಿ ತಿಳಿದುಬಂದಿದೆ ಎಂದು ನವೀದ್ ಅವರ ತಂದೆ ಶೇಖ್ ಅಬ್ದುಲ್ ಸಯೀದ್ ತಿಳಿಸಿದ್ದಾರೆ.

ಮೃತರ ಕುಟುಂಬ ಸದಸ್ಯರು ತುರ್ತಾಗಿ ಅಮೆರಿಕಕ್ಕೆ ತೆರಳಲು ಅವಕಾಶ ಕಲ್ಪಿಸುವಂತೆ ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರಿಗೆ ಮನವಿ ಮಾಡಿದ್ದಾರೆ. ಇದೇ ವೇಳೆ ಮಜ್ಲಿಸ್ ಬಚಾವೋ ತೆಹ್ರೀಕ್ ಸಂಘಟನೆಯ ವಕ್ತಾರ ಅಮ್ಜದ್ ಉಲ್ಲಾ ಖಾನ್ ಕುಟುಂಬಸ್ಥರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದು, ತುರ್ತು ವೀಸಾ ವ್ಯವಸ್ಥೆ ಕಲ್ಪಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಜೆನೆರಿಕ್ ಔಷಧಿಗಳ ಮೇಲೆ ಟ್ರಂಪ್ ಹೊಸ ಸುಂಕ ನೀತಿ: 2028ರ ಬಳಿಕ 100%, ನಂತರ 200% ತೆರಿಗೆ ಘೋಷಣೆ

0

ವಾಷಿಂಗ್ಟನ್: ಅಮೆರಿಕದಲ್ಲಿ ದೇಶೀಯ ಔಷಧ ಉತ್ಪಾದನೆಯನ್ನು ಉತ್ತೇಜಿಸುವ ಉದ್ದೇಶದಿಂದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಮದು ಮಾಡಿಕೊಳ್ಳುವ ಜೆನೆರಿಕ್ ಔಷಧಿಗಳ ಮೇಲೆ ಹೊಸ ಸುಂಕ ನೀತಿಯನ್ನು ಘೋಷಿಸಿದ್ದಾರೆ. ಹಂತಹಂತವಾಗಿ ಜಾರಿಗೆ ಬರಲಿರುವ ಈ ನೀತಿಯ ಪ್ರಕಾರ, 2028ರ ಬಳಿಕ ಆಮದು ಔಷಧಿಗಳ ಮೇಲೆ ಭಾರೀ ಪ್ರಮಾಣದ ಸುಂಕ ವಿಧಿಸಲಾಗುತ್ತದೆ.

ಟ್ರಂಪ್ ಅವರು ತಮ್ಮ Truth Social ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಮಾಹಿತಿ ಹಂಚಿಕೊಂಡಿದ್ದು, ಔಷಧ ಕಂಪನಿಗಳು ಅಮೆರಿಕದಲ್ಲೇ ಉತ್ಪಾದನಾ ಘಟಕಗಳನ್ನು ಸ್ಥಾಪಿಸಲು ಈ ನೀತಿ ಪ್ರೋತ್ಸಾಹ ನೀಡಲಿದೆ ಎಂದು ಹೇಳಿದ್ದಾರೆ. ವಿದೇಶಿ ಆಮದು ಅವಲಂಬನೆ ಕಡಿಮೆ ಮಾಡಿ ದೇಶೀಯ ಉತ್ಪಾದನೆಯನ್ನು ಬಲಪಡಿಸುವುದು ಸರ್ಕಾರದ ಪ್ರಮುಖ ಉದ್ದೇಶವಾಗಿದೆ ಎಂದು ಅವರು ತಿಳಿಸಿದ್ದಾರೆ.

ಹೊಸ ನೀತಿಯ ಪ್ರಕಾರ, 2026ರ ಆಗಸ್ಟ್ 1ರಿಂದ ಮುಂದಿನ ಎರಡು ವರ್ಷಗಳವರೆಗೆ ಜೆನೆರಿಕ್ ಔಷಧಿಗಳ ಆಮದಿಗೆ ಯಾವುದೇ ಹೆಚ್ಚುವರಿ ಸುಂಕ ವಿಧಿಸಲಾಗುವುದಿಲ್ಲ. ಆದರೆ 2028ರಿಂದ ಒಂದು ವರ್ಷದವರೆಗೆ 100 ಶೇಕಡಾ ಸುಂಕ ಜಾರಿಗೆ ಬರಲಿದ್ದು, ಅದರ ಬಳಿಕ 200 ಶೇಕಡಾ ಸುಂಕ ವಿಧಿಸಲಾಗುತ್ತದೆ ಎಂದು ಟ್ರಂಪ್ ಘೋಷಿಸಿದ್ದಾರೆ.

ನಿಗದಿತ ಅವಧಿಯೊಳಗೆ ಅಮೆರಿಕದಲ್ಲಿ ಉತ್ಪಾದನಾ ಘಟಕಗಳನ್ನು ಸ್ಥಾಪಿಸದ ಕಂಪನಿಗಳಿಗೆ ಈ ಹೆಚ್ಚುವರಿ ಸುಂಕ ದಂಡದ ರೀತಿಯಲ್ಲಿ ಪರಿಣಾಮ ಬೀರುತ್ತದೆ ಎಂದು ಟ್ರಂಪ್ ಎಚ್ಚರಿಸಿದ್ದಾರೆ. ಈಗಾಗಲೇ ಅಮೆರಿಕದ ವಿವಿಧ ಭಾಗಗಳಲ್ಲಿ ಹೊಸ ಔಷಧ ಉತ್ಪಾದನಾ ಘಟಕಗಳ ನಿರ್ಮಾಣ ಆರಂಭವಾಗಿದ್ದು, ಈ ಕ್ರಮದಿಂದ ದೇಶೀಯ ಉತ್ಪಾದನೆ ಮತ್ತಷ್ಟು ಬಲಗೊಳ್ಳಲಿದೆ ಎಂಬ ವಿಶ್ವಾಸವನ್ನೂ ವ್ಯಕ್ತಪಡಿಸಿದ್ದಾರೆ.

ಅಮೆರಿಕದಲ್ಲಿ ಬಳಕೆಯಾಗುವ ಔಷಧಿಗಳಲ್ಲಿ 90 ಶೇಕಡಕ್ಕೂ ಹೆಚ್ಚು ಜೆನೆರಿಕ್ ಔಷಧಿಗಳೇ ಇರುವ ಹಿನ್ನೆಲೆಯಲ್ಲಿ, ಈ ಹೊಸ ಸುಂಕ ನೀತಿ ಜಾಗತಿಕ ಔಷಧ ಉದ್ಯಮದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ವಿಶೇಷವಾಗಿ ಅಮೆರಿಕಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಜೆನೆರಿಕ್ ಔಷಧಿಗಳನ್ನು ರಫ್ತು ಮಾಡುವ ಭಾರತದ ಔಷಧ ಕಂಪನಿಗಳ ಮೇಲೆ ಇದರ ಪರಿಣಾಮ ಉಂಟಾಗಬಹುದು ಎಂದು ತಜ್ಞರು ವಿಶ್ಲೇಷಿಸಿದ್ದಾರೆ.

Karnataka Cabinet Expansion: ಸಂಪುಟ ವಿಸ್ತರಣೆ ಮತ್ತೆ ವಿಳಂಬ, ಹೈಕಮಾಂಡ್ ತೀರ್ಮಾನಕ್ಕೆ ಕಾಯುತ್ತಿರುವ ಕಾಂಗ್ರೆಸ್!

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಮತ್ತೆ ಒಂದೆರಡು ದಿನ ಮುಂದೂಡಿಕೆಯಾಗಿದೆ.

ಬುಧವಾರವೇ ನೂತನ ಸಚಿವರ ಪ್ರಮಾಣವಚನ ನಡೆಯುವ ಸಾಧ್ಯತೆ ಇತ್ತು ಎನ್ನಲಾಗಿದ್ದರೂ, ಹೈಕಮಾಂಡ್ ನಾಯಕರ ಲಭ್ಯತೆ ಕೊರತೆಯಿಂದ ಅಂತಿಮ ನಿರ್ಧಾರ ವಿಳಂಬವಾಗಿದೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಬೆಂಗಳೂರಿಗೆ ಮರಳಲಿದ್ದು, ವಾರಾಂತ್ಯದಲ್ಲಿ ಮತ್ತೆ ದೆಹಲಿಗೆ ತೆರಳಿ ಕಾಂಗ್ರೆಸ್ ಹೈಕಮಾಂಡ್ ನಾಯಕರೊಂದಿಗೆ ಅಂತಿಮ ಸುತ್ತಿನ ಮಾತುಕತೆ ನಡೆಸುವ ಸಾಧ್ಯತೆ ಇದೆ.

ದೆಹಲಿಯ ಕರ್ನಾಟಕ ಭವನದಲ್ಲಿ ಮಂಗಳವಾರ ರಾತ್ರಿ ಮಾತನಾಡಿದ ಡಿಕೆ ಶಿವಕುಮಾರ್, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಬಂಧನದ ಬೆಳವಣಿಗೆಯಿಂದ ಸಂಪುಟ ವಿಸ್ತರಣೆ ಪ್ರಕ್ರಿಯೆ ವಿಳಂಬವಾಗುವ ಸಾಧ್ಯತೆ ಇದೆ ಎಂದು ಹೇಳಿದರು.

“ಸಂಪುಟ ವಿಸ್ತರಣೆ ಮುಂದೂಡಲು ಇಷ್ಟವಿಲ್ಲ. ಆದರೆ ಅಂತಿಮ ತೀರ್ಮಾನ ಹೈಕಮಾಂಡ್ ನಿರ್ಧಾರದಂತೆ ನಡೆಯಲಿದೆ” ಎಂದು ಸಿಎಂ ಸ್ಪಷ್ಟಪಡಿಸಿದರು. ಹಿರಿಯರು ಮತ್ತು ಕಿರಿಯರಿಗೆ ಸಮಾನ ಅವಕಾಶ ನೀಡುವ ಉದ್ದೇಶವಿದೆ. ಖಾಲಿ ಇರುವ ಸ್ಥಾನಗಳನ್ನು ಸಾಧ್ಯವಾದಷ್ಟು ಭರ್ತಿ ಮಾಡುವ ಪ್ರಯತ್ನ ಮಾಡಲಾಗುವುದು ಎಂದರು.

ದೆಹಲಿಯಲ್ಲಿ ನಡೆಯಬೇಕಿದ್ದ ಸಭೆ ಮುಂದೂಡಿಕೆ:

ಸಂಪುಟ ವಿಸ್ತರಣೆ ಕುರಿತು ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರೊಂದಿಗೆ ಸಭೆ ನಡೆಸಲು ಸಿದ್ಧತೆ ಮಾಡಿಕೊಂಡಿದ್ದರು.

ಆದರೆ, ನೀಟ್ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ನಾಯಕರನ್ನು ಪೊಲೀಸರು ವಶಕ್ಕೆ ಪಡೆದ ಹಿನ್ನೆಲೆಯಲ್ಲಿ ಹೈಕಮಾಂಡ್ ಗಮನ ಆ ಬೆಳವಣಿಗೆಯತ್ತ ಕೇಂದ್ರೀಕೃತವಾಯಿತು. ಹೀಗಾಗಿ ಕರ್ನಾಟಕ ಸಂಪುಟ ವಿಸ್ತರಣೆ ಕುರಿತು ನಡೆಯಬೇಕಿದ್ದ ಚರ್ಚೆ ಮುಂದೂಡಿಕೆಯಾಯಿತು.

ಸುಮಾರು 20 ಮಂದಿಗೆ ಅವಕಾಶ ಸಾಧ್ಯತೆ:

ಸಂಪುಟ ವಿಸ್ತರಣೆಯಲ್ಲಿ ಹೊಸ ಮುಖಗಳು ಹಾಗೂ ಅನುಭವಿ ನಾಯಕರಿಗೆ ಸಮಾನ ಆದ್ಯತೆ ನೀಡುವ ಸಾಧ್ಯತೆ ಇದೆ. ಸುಮಾರು 10 ಹೊಸಬರು ಮತ್ತು 10 ಹಿರಿಯ ಶಾಸಕರಿಗೆ ಸಚಿವ ಸ್ಥಾನ ಸಿಗಬಹುದು ಎಂಬ ಚರ್ಚೆ ನಡೆಯುತ್ತಿದೆ.

ಮುಸ್ಲಿಂ ಸಮುದಾಯದಿಂದ ರಿಜ್ವಾನ್ ಅರ್ಷದ್, ಜಮೀರ್ ಅಹ್ಮದ್ ಖಾನ್, ತನ್ವೀರ್ ಸೇಠ್, ಸಲೀಂ ಅಹ್ಮದ್ ಹಾಗೂ ಖನೀಜ್ ಫಾತಿಮಾ ಅವರ ಹೆಸರುಗಳು ಕೇಳಿಬರುತ್ತಿದ್ದು, ಇವರಲ್ಲಿ ಮೂವರಿಗೆ ಅವಕಾಶ ಸಿಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಲಿಂಗಾಯತ ಸಮುದಾಯದಿಂದ ಅಶೋಕ್ ಪಟ್ಟಣ, ಲಕ್ಷ್ಮಣ ಸವದಿ, ಕಾಶಪ್ಪನವರ್, ಬಸವರಾಜ ರಾಯರೆಡ್ಡಿ, ಹಂಪನಗೌಡ ಬಾದರ್ಲಿ, ಯಶವಂತ್ ರಾಯಗೌಡ ಹಾಗೂ ಅಪ್ಪಾಜಿ ನಾಡಗೌಡ ಅವರ ಹೆಸರುಗಳು ಚರ್ಚೆಯಲ್ಲಿವೆ.

ಒಕ್ಕಲಿಗ ಸಮುದಾಯದಿಂದ ಶರತ್ ಬಚ್ಚೇಗೌಡ, ಮಾಗಡಿ ಬಾಲಕೃಷ್ಣ, ಗುಬ್ಬಿ ಶ್ರೀನಿವಾಸ್, ಶಿವಲಿಂಗೇಗೌಡ, ಚಲುವರಾಯಸ್ವಾಮಿ ಹಾಗೂ ಪ್ರಿಯಾ ಕೃಷ್ಣ ಅವರ ಹೆಸರುಗಳು ಸಚಿವ ಸ್ಥಾನದ ಆಕಾಂಕ್ಷಿಗಳ ಪಟ್ಟಿಯಲ್ಲಿವೆ.

ಮಹಿಳಾ ಕೋಟಾದಲ್ಲೂ ಎರಡು ಅಥವಾ ಮೂರು ಸ್ಥಾನ ನೀಡುವ ಕುರಿತು ಚರ್ಚೆ ನಡೆಯುತ್ತಿದ್ದು, ಆರತಿ ಕೃಷ್ಣ, ಲಕ್ಷ್ಮೀ ಹೆಬ್ಬಾಳ್ಕರ್, ಉಮಾಶ್ರೀ ಹಾಗೂ ನಯನಾ ಮೋಟಮ್ಮ ಅವರ ಹೆಸರುಗಳು ಕೇಳಿಬರುತ್ತಿವೆ.

ಸಂಪುಟ ವಿಸ್ತರಣೆ ಈ ವಾರದೊಳಗೆ ನಡೆಯುವ ಸಾಧ್ಯತೆ ಇದ್ದು, ಅಂತಿಮವಾಗಿ ಹೈಕಮಾಂಡ್ ಯಾರಿಗೆ ಅವಕಾಶ ನೀಡಲಿದೆ ಎಂಬುದು ರಾಜ್ಯ ರಾಜಕೀಯದಲ್ಲಿ ಕುತೂಹಲ ಮೂಡಿಸಿದೆ.

Tumakuru-Bengaluru Highway Accident: ಕೆಮಿಕಲ್ ಲಾರಿ ಪಲ್ಟಿ, ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್!

ಬೆಂಗಳೂರು: ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಾಯಕಾರಿ ರಾಸಾಯನಿಕ ತುಂಬಿದ ಲಾರಿ ಪಲ್ಟಿಯಾಗಿ ಅನಿಲ ಸೋರಿಕೆಯಾದ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ ಕುಲುವನಹಳ್ಳಿ ಗ್ರಾಮದ ಬಳಿ ನಡೆದಿದೆ.

ತುಮಕೂರು ಕಡೆಯಿಂದ ಬೆಂಗಳೂರಿನತ್ತ ಬರುತ್ತಿದ್ದ ಕ್ಲೋರೈಡ್ ಕೆಮಿಕಲ್ ತುಂಬಿದ ಲಾರಿ, ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲೇ ಪಲ್ಟಿಯಾಗಿದೆ. ಲಾರಿ ಪಲ್ಟಿಯಾದ ಪರಿಣಾಮ ರಾಸಾಯನಿಕ ಸೋರಿಕೆಯಾಗಿದ್ದು, ಸ್ಥಳೀಯರು ಹಾಗೂ ವಾಹನ ಸವಾರರಲ್ಲಿ ಆತಂಕ ಮೂಡಿದೆ.

ಘಟನೆ ಮಾಹಿತಿ ತಿಳಿದ ತಕ್ಷಣ ನೆಲಮಂಗಲ ಅಗ್ನಿಶಾಮಕ ಸಿಬ್ಬಂದಿ ಹಾಗೂ ನೆಲಮಂಗಲ ಸಂಚಾರಿ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಸೋರಿಕೆಯನ್ನು ನಿಯಂತ್ರಿಸುವುದು ಹಾಗೂ ಲಾರಿಯನ್ನು ತೆರವುಗೊಳಿಸುವ ಕಾರ್ಯಾಚರಣೆ ಕೈಗೊಳ್ಳಲಾಗಿದೆ.

ಅಪಾಯಕಾರಿ ರಾಸಾಯನಿಕ ಸೋರಿಕೆಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಸ್ಥಳದಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಇನ್ನು ಲಾರಿ ಪಲ್ಟಿಯಾದ ಪರಿಣಾಮ ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿದೆ. ಭಯದ ವಾತಾವರಣದ ನಡುವೆ ವಾಹನ ಸವಾರರು ನಿಧಾನಗತಿಯಲ್ಲಿ ಸಂಚರಿಸುವಂತಾಗಿದೆ.

ಪೊಲೀಸರು ಸಂಚಾರ ನಿಯಂತ್ರಣಕ್ಕೆ ಕ್ರಮ ಕೈಗೊಂಡಿದ್ದು, ಲಾರಿ ತೆರವು ಕಾರ್ಯ ಪೂರ್ಣಗೊಂಡ ಬಳಿಕ ಸಂಚಾರ ಸಾಮಾನ್ಯವಾಗುವ ನಿರೀಕ್ಷೆಯಿದೆ.

USA-Iran Conflict: ಕಚ್ಚಾ ತೈಲ ಬೆಲೆ 92 ಡಾಲರ್‌ಗೆ ಏರಿಕೆ, ಭಾರತಕ್ಕೆ ಹೆಚ್ಚುತ್ತಾ ಹೊರೆ?

0

ಲಂಡನ್: ಮಧ್ಯಪ್ರಾಚ್ಯದಲ್ಲಿ ಅಮೆರಿಕ ಮತ್ತು ಇರಾನ್ ನಡುವಿನ ಮಿಲಿಟರಿ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಭಾರಿ ಏರಿಕೆ ಕಂಡಿದೆ.

ಅಂತರರಾಷ್ಟ್ರೀಯ ಮಾನದಂಡವಾಗಿರುವ ಬ್ರೆಂಟ್ ಕಚ್ಚಾ ತೈಲದ ಬೆಲೆ ಶೇ.1.2ಕ್ಕೂ ಹೆಚ್ಚು ಏರಿಕೆಯಾಗಿದ್ದು, ಪ್ರತಿ ಬ್ಯಾರಲ್‌ಗೆ 92.09 ಡಾಲರ್‌ಗೆ ತಲುಪಿದೆ. ಜೂನ್ ತಿಂಗಳ ಬಳಿಕ ಇದು ದಾಖಲಾದ ಅತಿ ಹೆಚ್ಚಿನ ಬೆಲೆಯಾಗಿದೆ.

ಇದೇ ವೇಳೆ ಅಮೆರಿಕದ ಪ್ರಮುಖ ಕಚ್ಚಾ ತೈಲ ಮಾನದಂಡವಾದ ಡಬ್ಲ್ಯೂಟಿಐ ದರವೂ ಶೇ.1.1ರಷ್ಟು ಏರಿಕೆಯಾಗಿದ್ದು, ಪ್ರತಿ ಬ್ಯಾರಲ್‌ಗೆ 85.23 ಡಾಲರ್ ತಲುಪಿದೆ.

ಹಾರ್ಮುಜ್ ಜಲಸಂಧಿಯಲ್ಲಿ ಆತಂಕ:

ವಿಶ್ವದ ಸುಮಾರು 20% ತೈಲ ಸಾಗಣೆ ನಡೆಯುವ ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ತೈಲ ಟ್ಯಾಂಕರ್‌ಗಳನ್ನು ತಡೆದು ದಾಳಿ ನಡೆಸಿರುವ ಹಿನ್ನೆಲೆಯಲ್ಲಿ ಜಾಗತಿಕ ತೈಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುವ ಆತಂಕ ಹೆಚ್ಚಾಗಿದೆ.

ಅಮೆರಿಕದ ಸೇನಾ ನೆಲೆಗಳು ಹಾಗೂ ರೇಡಾರ್ ಕೇಂದ್ರಗಳ ಮೇಲೆ ಇರಾನ್ ದಾಳಿ ನಡೆಸಿದ್ದು, ಇದಕ್ಕೆ ಪ್ರತಿಯಾಗಿ ಅಮೆರಿಕ ಕೂಡ ಇರಾನ್ ಆಸ್ತಿಗಳ ಮೇಲೆ ದಾಳಿ ನಡೆಸಿದೆ. ಈ ಬೆಳವಣಿಗೆಗಳು ತೈಲ ಮಾರುಕಟ್ಟೆಯಲ್ಲಿ ಅಸ್ಥಿರತೆ ಸೃಷ್ಟಿಸಿವೆ.

ಭಾರತ ಸೇರಿದಂತೆ ಆಮದುದಾರ ರಾಷ್ಟ್ರಗಳಿಗೆ ಹೊರೆ:

ಈ ಹಿಂದೆ ಅಮೆರಿಕ-ಇರಾನ್ ನಡುವೆ ಕದನ ವಿರಾಮ ಘೋಷಣೆಯಾದ ಬಳಿಕ ಜೂನ್ ಕೊನೆಯ ವಾರದಲ್ಲಿ ಕಚ್ಚಾ ತೈಲ ದರ ಪ್ರತಿ ಬ್ಯಾರಲ್‌ಗೆ ಸುಮಾರು 70 ಡಾಲರ್‌ಗೆ ಇಳಿಕೆಯಾಗಿತ್ತು. ಆದರೆ ಇದೀಗ ಮತ್ತೆ ಬೆಲೆ ಏರಿಕೆ ಕಾಣುತ್ತಿದೆ.

ಕಚ್ಚಾ ತೈಲ ದರ ಏರಿಕೆಯಿಂದ ಸರಕು ಸಾಗಣೆ ವೆಚ್ಚ ಹೆಚ್ಚಾಗುವ ಸಾಧ್ಯತೆ ಇದ್ದು, ಜಾಗತಿಕ ಮಟ್ಟದಲ್ಲಿ ಹಣದುಬ್ಬರ ಏರಿಕೆಯ ಆತಂಕ ಎದುರಾಗಿದೆ. ತೈಲ ಬೆಲೆ ಏರಿಕೆಯ ಪರಿಣಾಮ ಏಷ್ಯನ್ ಷೇರು ಮಾರುಕಟ್ಟೆ ಹಾಗೂ ಹೂಡಿಕೆದಾರರ ಮೇಲೂ ಪರಿಣಾಮ ಬೀರಿದೆ.

ಭಾರತ ಸೇರಿದಂತೆ ಪ್ರಮುಖ ತೈಲ ಆಮದುದಾರ ರಾಷ್ಟ್ರಗಳಿಗೆ ಇದು ಆರ್ಥಿಕ ಒತ್ತಡ ಹೆಚ್ಚಿಸಬಹುದು. ಮುಂದಿನ ದಿನಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರಗಳ ಮೇಲೂ ಇದರ ಪರಿಣಾಮ ಬೀರುವ ಸಾಧ್ಯತೆ ಇದೆ.

ತೈಲದ ಬೇಡಿಕೆ ಹೆಚ್ಚಾಗಿ ಪೂರೈಕೆ ಕಡಿಮೆಯಾದಾಗ ಬೆಲೆ ಏರಿಕೆಯಾಗುತ್ತದೆ. ಪ್ರಸ್ತುತ ಮಧ್ಯಪ್ರಾಚ್ಯದ ಸಂಘರ್ಷದಿಂದ ಪೂರೈಕೆ ಕುರಿತು ಆತಂಕ ಉಂಟಾಗಿರುವುದೇ ಬೆಲೆ ಏರಿಕೆಗೆ ಪ್ರಮುಖ ಕಾರಣವಾಗಿದೆ.

 

Abhishek Porel Case: ಅಭಿಷೇಕ್ ಪೊರೆಲ್‌ಗೆ ಸಂಕಷ್ಟ, ಕ್ರಿಕೆಟಿಗನ ಬಂಧನಕ್ಕೆ ಹೈಕೋರ್ಟ್ ಸೂಚನೆ!

0

ಕೋಲ್ಕತಾ: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಿಕೆಟಿಗ ಅಭಿಷೇಕ್ ಪೊರೆಲ್ ಅವರನ್ನು ಬಂಧಿಸುವಂತೆ ಕಲ್ಕತ್ತಾ ಹೈಕೋರ್ಟ್ ಪೊಲೀಸರಿಗೆ ಆದೇಶ ನೀಡಿದೆ.

ಅಭಿಷೇಕ್ ಪೊರೆಲ್ ವಿರುದ್ಧ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಅತ್ಯಾಚಾರ, ಹಲ್ಲೆ, ಬೆದರಿಕೆ ಸೇರಿದಂತೆ ಹಲವು ಗಂಭೀರ ಆರೋಪಗಳಡಿ ಪ್ರಕರಣ ದಾಖಲಾಗಿದೆ.

ದೂರಿನಲ್ಲಿ, ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ಸಂಬಂಧ ಬೆಳೆಸಿದ್ದು, ಬಳಿಕ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಯುವತಿ ಆರೋಪಿಸಿದ್ದಾಳೆ. ಈ ಆರೋಪಗಳ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಪ್ರಕರಣದ ವಿಚಾರಣೆ ನಡೆಸಿದ ಕಲ್ಕತ್ತಾ ಹೈಕೋರ್ಟ್, ಅಭಿಷೇಕ್ ಪೊರೆಲ್ ಅವರನ್ನು ತಕ್ಷಣ ಬಂಧಿಸುವಂತೆ ಪೊಲೀಸರಿಗೆ ಸೂಚನೆ ನೀಡಿದೆ.

ಇನ್ನೊಂದೆಡೆ, ತಮ್ಮ ವಿರುದ್ಧದ ಎಲ್ಲ ಆರೋಪಗಳನ್ನು ಅಭಿಷೇಕ್ ಪೊರೆಲ್ ತಳ್ಳಿಹಾಕಿದ್ದಾರೆ. ಆರೋಪಗಳು ಆಧಾರರಹಿತವಾಗಿವೆ ಎಂದು ಅವರು ಹೇಳಿದ್ದಾರೆ.

ಸದ್ಯ ಪ್ರಕರಣದ ತನಿಖೆ ಮುಂದುವರಿದಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಳ್ಳುತ್ತಿದ್ದಾರೆ.

ಟೆಸ್ಟ್ ಡ್ರೈವ್ ವೇಳೆ ಕಾರು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ: ತಪ್ಪಿದ ಭಾರಿ ಅನಾಹುತ!

ಬೆಂಗಳೂರು: ಟೆಸ್ಟ್ ಡ್ರೈವ್ ವೇಳೆ ಮಹಿಳೆ ಚಲಾಯಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಫುಟ್‌ಪಾತ್ ಮೇಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಬೆಂಗಳೂರಿನ ಕೆ.ಆರ್.ಪುರಂನಲ್ಲಿ ನಡೆದಿದೆ.

ಕೆ.ಆರ್.ಪುರಂ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯ ಸಿಂಗಯ್ಯನಪಾಳ್ಯ ಬಸ್ ನಿಲ್ದಾಣದ ಬಳಿ ಈ ಘಟನೆ ನಡೆದಿದೆ. ಟೆಸ್ಟ್ ಡ್ರೈವ್‌ಗಾಗಿ ತೆಗೆದುಕೊಂಡಿದ್ದ ಕೆಂಪು ಬಣ್ಣದ ಶಿಫ್ಟ್ ಡಿಸೈರ್ ಕಾರು ಚಲಾಯಿಸುತ್ತಿದ್ದ ವೇಳೆ ಏಕಾಏಕಿ ನಿಯಂತ್ರಣ ತಪ್ಪಿದೆ.

ನಿಯಂತ್ರಣ ಕಳೆದುಕೊಂಡ ಕಾರು ಫುಟ್‌ಪಾತ್ ಮೇಲೆ ಹತ್ತಿ ಅಲ್ಲಿದ್ದ ಎಲೆಕ್ಟ್ರಿಕ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಅದೃಷ್ಟವಶಾತ್ ಕಾರು ಚಾಲನೆ ಮಾಡುತ್ತಿದ್ದ ಮಹಿಳೆ ಯಾವುದೇ ಗಂಭೀರ ಗಾಯಗಳಿಲ್ಲದೆ ಪಾರಾಗಿದ್ದಾರೆ.

ಘಟನೆ ಮಾಹಿತಿ ತಿಳಿದ ತಕ್ಷಣ ಕೆ.ಆರ್.ಪುರಂ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಹಿಳೆ ವಿರುದ್ಧ ನಿರ್ಲಕ್ಷ್ಯ ಚಾಲನೆ ಆರೋಪದಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಈ ವೇಳೆ ದೊಡ್ಡ ಅನಾಹುತವೊಂದು ತಪ್ಪಿದೆ. ಕಾರು ಡಿಕ್ಕಿ ಹೊಡೆದ ವಿದ್ಯುತ್ ಕಂಬದ ಮುಂದೆಯೇ ಬಸ್ ನಿಲ್ದಾಣವಿತ್ತು. ಕಂಬ ಇಲ್ಲದಿದ್ದರೆ ಕಾರು ನೇರವಾಗಿ ಬಸ್ ನಿಲ್ದಾಣಕ್ಕೆ ನುಗ್ಗುವ ಸಾಧ್ಯತೆ ಇತ್ತು. ಹಗಲು ಹೊತ್ತಿನಲ್ಲಿ ಘಟನೆ ನಡೆದಿದ್ದರಿಂದ ಪ್ರಯಾಣಿಕರ ಜೀವಕ್ಕೂ ಅಪಾಯ ಎದುರಾಗಬಹುದಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ.