ಉಡುಪಿ: ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು ಜಂಕ್ಷನ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ.
ಮಾಜಿ ಸಚಿವ ರಮಾನಾಥ ರೈ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರಿಗೆ ಬಸ್ ಡಿಕ್ಕಿ ಹೊಡೆದಿದೆ.
ಇಂದು ಮಧ್ಯಾಹ್ನ ಸುಮಾರು 3.30ರ ವೇಳೆಗೆ ಅಪಘಾತ ಸಂಭವಿಸಿದ್ದು, ಕಾರ್ಕಳದಿಂದ ಮೂಡುಬಿದ್ರೆ ಕಡೆಗೆ ತೆರಳುತ್ತಿದ್ದ ಬಸ್ ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಇನ್ನೋವಾ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.
ಅಪಘಾತದ ಬಳಿಕ ಕಾರಿನಲ್ಲಿ ಸಿಲುಕಿದ್ದ ರಮಾನಾಥ ರೈ ಅವರನ್ನು ಸ್ಥಳೀಯರು ಹರಸಾಹಸಪಟ್ಟು ಹೊರತೆಗೆದಿದ್ದಾರೆ. ಗಾಯಗೊಂಡ ರಮಾನಾಥ ರೈ ಸೇರಿದಂತೆ ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಸ್ ಹಾಗೂ ಕಾರಿನಲ್ಲಿದ್ದ ಹಲವರಿಗೂ ಗಾಯಗಳಾಗಿದ್ದು, ಘಟನೆ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನಕಲಿ ಔಷಧಿ ಪೂರೈಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ಪ್ರತಿಷ್ಠಿತ ಖಾಸಗಿ ಆಸ್ಪತ್ರೆಗಳ ಫಾರ್ಮಸಿ ಪರವಾನಗಿಯನ್ನು ಔಷಧ ನಿಯಂತ್ರಣ ಇಲಾಖೆ ರದ್ದುಗೊಳಿಸಿದೆ.
ವಿಶೇಷ ತನಿಖಾ ತಂಡದ ಶಿಫಾರಸಿನ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ.
ಲೈಸೆನ್ಸ್ ರದ್ದಾದ ಆಸ್ಪತ್ರೆಗಳ ಫಾರ್ಮಸಿಗಳಲ್ಲಿ ಔಷಧಿ ಮಾರಾಟ ಮಾಡದಂತೆ ಎಸ್ಐಟಿ ಅಧಿಕಾರಿಗಳು ಸೂಚನೆ ನೀಡಿದ್ದು, ಫಾರ್ಮಸಿಗಳನ್ನು ಮುಚ್ಚಿಸಲಾಗಿದೆ. ಅಲ್ಲದೆ, ನಕಲಿ ಔಷಧಿ ಪೂರೈಕೆಯಾಗಿರುವ ನಗರದ 25ಕ್ಕೂ ಹೆಚ್ಚು ಖಾಸಗಿ ಆಸ್ಪತ್ರೆಗಳಿಗೆ ಹಂತ ಹಂತವಾಗಿ ನೋಟಿಸ್ ನೀಡಲು ತನಿಖಾ ತಂಡ ಸಿದ್ಧತೆ ನಡೆಸಿದೆ.
ಪ್ರಾಥಮಿಕ ತನಿಖೆಯ ಪ್ರಕಾರ, ಬೆಂಗಳೂರಿನ ಸುಮಾರು 70ರಿಂದ 80 ಖಾಸಗಿ ಆಸ್ಪತ್ರೆಗಳು, ಕ್ಲಿನಿಕ್ಗಳು ಹಾಗೂ ಮೆಡಿಕಲ್ ಸ್ಟೋರ್ಗಳಿಗೆ ನಕಲಿ ಔಷಧಿಗಳು ಪೂರೈಕೆಯಾಗಿರುವ ಶಂಕೆ ವ್ಯಕ್ತವಾಗಿದೆ. ಸಂಬಂಧಪಟ್ಟ ಆಸ್ಪತ್ರೆಗಳ ಆಡಳಿತ ಮಂಡಳಿ ಹಾಗೂ ಫಾರ್ಮಸಿ ಮುಖ್ಯಸ್ಥರಿಗೆ ನೋಟಿಸ್ ನೀಡಿ ವಿಚಾರಣೆ ನಡೆಸಲು ಅಧಿಕಾರಿಗಳು ಮುಂದಾಗಿದ್ದಾರೆ.
ಮಿನರ್ವ ಸರ್ಕಲ್ ಬಳಿ ಇರುವ ಕೃಪಾ ಹೆಲ್ತ್ ಕೇರ್ ಮೇಲೆ ಎಸ್ಐಟಿ ಈ ಹಿಂದೆ ದಾಳಿ ನಡೆಸಿ ನಕಲಿ ಔಷಧಿ ಜಾಲವನ್ನು ಪತ್ತೆಹಚ್ಚಿತ್ತು. ಅಲ್ಲಿಂದಲೇ ಹಲವು ಫಾರ್ಮಸಿಗಳಿಗೆ ನಕಲಿ ಔಷಧಿ ಸರಬರಾಜಾಗಿರುವುದು ತನಿಖೆಯಲ್ಲಿ ಪತ್ತೆಯಾಗಿದೆ.
ರಾಮನಗರ: ಪೋಕ್ಸೋ ಪ್ರಕರಣದಲ್ಲಿ ಆರೋಪಿಯಾಗಿದ್ದ ದೈಹಿಕ ಶಿಕ್ಷಕರೊಬ್ಬರು ಪೊಲೀಸ್ ಕಚೇರಿಯ ಮೂರನೇ ಮಹಡಿಯಿಂದ ಕೆಳಗೆ ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ.
ಮೃತರನ್ನು ವಿಜಯನಗರ ಮೂಲದ ಶಶಿಧರ್ (49) ಎಂದು ಗುರುತಿಸಲಾಗಿದೆ. ಚನ್ನಪಟ್ಟಣ ತಾಲೂಕಿನ ಅನುದಾನಿತ ಪ್ರೌಢಶಾಲೆಯೊಂದರಲ್ಲಿ ಕಳೆದ 15 ವರ್ಷಗಳಿಂದ ದೈಹಿಕ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದರು.
ಶಾಲೆಯ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪದ ಹಿನ್ನೆಲೆಯಲ್ಲಿ ಶಶಿಧರ್ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ರಾಮನಗರ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಪೊಲೀಸರು ಅವರನ್ನು ಬಂಧಿಸಿ ವಿಚಾರಣೆ ನಡೆಸಿದ್ದರು.
ಭಾನುವಾರ ಮುಂಜಾನೆ ವೈದ್ಯಕೀಯ ತಪಾಸಣೆ ಬಳಿಕ ಮುಂದಿನ ಕಾನೂನು ಪ್ರಕ್ರಿಯೆಯ ಭಾಗವಾಗಿ ಬೆರಳಚ್ಚು ಪಡೆಯಲು ಅವರನ್ನು ಬೆಂಗಳೂರು ದಕ್ಷಿಣ ಜಿಲ್ಲೆಯ ಎಸ್ಪಿ ಕಚೇರಿಗೆ ಕರೆತರಲಾಗಿತ್ತು.
ಮೂರನೇ ಮಹಡಿಯಲ್ಲಿ ಬೆರಳಚ್ಚು ನೋಂದಣಿ ಪ್ರಕ್ರಿಯೆಗೆ ಸಿದ್ಧತೆ ನಡೆಸುತ್ತಿದ್ದ ವೇಳೆ ಶಶಿಧರ್ ಕೆಳಗೆ ಬಿದ್ದಿದ್ದಾರೆ ಎನ್ನಲಾಗಿದೆ. ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಮಾರ್ಗಮಧ್ಯೆಯೇ ಮೃತಪಟ್ಟಿದ್ದಾರೆ.
ಮಂಡ್ಯ: ಶ್ರೀರಂಗಪಟ್ಟಣ ತಾಲೂಕಿನ ಬೆಳಗೊಳ ಗ್ರಾಮದಲ್ಲಿ ಮುನೇಶ್ವರ ಸ್ವಾಮಿ ದೇವಾಲಯದ ಮೂರ್ತಿಯನ್ನು ದುಷ್ಕರ್ಮಿಗಳು ವಿರೂಪಗೊಳಿಸಿರುವ ಘಟನೆ ನಡೆದಿದೆ.
ಗ್ರಾಮದ ಮಜ್ಜಿಗೆಪುರ ರಸ್ತೆಯಲ್ಲಿರುವ ಮುನೇಶ್ವರ ಸ್ವಾಮಿ ದೇಗುಲದಲ್ಲಿ ತಡರಾತ್ರಿ ಈ ಕೃತ್ಯ ನಡೆದಿದೆ ಎನ್ನಲಾಗಿದೆ.
ದುಷ್ಕರ್ಮಿಗಳು ದೇವಾಲಯದ ಮೂರ್ತಿಯ ಮುಖದ ಭಾಗವನ್ನು ವಿರೂಪಗೊಳಿಸಿದ್ದಾರೆ. ಬೆಳಗ್ಗೆ ಈ ವಿಚಾರ ಗ್ರಾಮಸ್ಥರ ಗಮನಕ್ಕೆ ಬರುತ್ತಿದ್ದಂತೆ ಸ್ಥಳದಲ್ಲಿ ಆತಂಕ ಹಾಗೂ ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ.
ಪವಿತ್ರ ಸ್ಥಳದಲ್ಲಿ ಇಂತಹ ಕೃತ್ಯ ಎಸಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಪ್ರಕರಣದ ಆರೋಪಿಗಳನ್ನು ಕೂಡಲೇ ಪತ್ತೆಹಚ್ಚಿ ಬಂಧಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಕೆಆರ್ಎಸ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದೇವಾಲಯದ ಸುತ್ತಮುತ್ತಲಿನ ಮಾಹಿತಿ ಹಾಗೂ ಲಭ್ಯವಿರುವ ಸುಳಿವುಗಳ ಆಧಾರದ ಮೇಲೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಬೆಂಗಳೂರು: ಬೆಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹೆಡ್ ಕಾನ್ಸ್ಟೇಬಲ್ ಒಬ್ಬರ ಮೃತದೇಹ ಹೊರವಲಯದ ನಂದಗುಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪತ್ತೆಯಾಗಿದೆ.
ಮೃತರನ್ನು ಕೋಲಾರ ಜಿಲ್ಲೆಯ ಮುಳಬಾಗಿಲು ಮೂಲದ ನವೀನ್ ಶೆಟ್ಟಿ (35) ಎಂದು ಗುರುತಿಸಲಾಗಿದೆ. ಕೆಎಸ್ಆರ್ಪಿ 3ನೇ ಬೆಟಾಲಿಯನ್ನಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿದ್ದ ನವೀನ್, ಸದ್ಯ ಬೆಂಗಳೂರು ಐಬಿ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು ಎನ್ನಲಾಗಿದೆ.
ನವೀನ್ ಅವರ ಮೃತದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಘಟನೆ ಅನುಮಾನಕ್ಕೆ ಕಾರಣವಾಗಿದೆ. ಸ್ಥಳಕ್ಕೆ ನಂದಗುಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಉಡುಪಿ: ಕೊಡವೂರು ಚೆನ್ನಂಗಡಿ ಸಮೀಪ ಕಾರೊಂದು ನದಿಗೆ ಬಿದ್ದು, ಅದರೊಳಗೆ ಸಿಲುಕಿದ್ದ ಚಾಲಕ ಹಾಗೂ ಮೂರು ವರ್ಷದ ಮಗುವನ್ನು ಮೀನುಗಾರರೊಬ್ಬರು ಸಾಹಸದಿಂದ ರಕ್ಷಿಸಿರುವ ಘಟನೆ ನಡೆದಿದೆ.
ಕಾರು ನದಿಗೆ ಬಿದ್ದಿರುವುದನ್ನು ಗಮನಿಸಿದ ಮೀನುಗಾರ ಗಣೇಶ್ ಚೆನ್ನಂಗಡಿ, ತಕ್ಷಣ ನದಿಗೆ ಧುಮುಕಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ನೀರಿನ ಸೆಳೆತದ ನಡುವೆಯೂ ಧೈರ್ಯದಿಂದ ಕಾರ್ಯಾಚರಣೆ ನಡೆಸಿ ಕಾರಿನೊಳಗೆ ಸಿಲುಕಿದ್ದ ಚಾಲಕ ಹಾಗೂ ಮಗುವನ್ನು ಸುರಕ್ಷಿತವಾಗಿ ಹೊರಕ್ಕೆ ಕರೆತರುವಲ್ಲಿ ಯಶಸ್ವಿಯಾಗಿದ್ದಾರೆ.
ಗಣೇಶ್ ಅವರ ಸಮಯಪ್ರಜ್ಞೆ ಹಾಗೂ ಸಾಹಸದಿಂದ ಇಬ್ಬರ ಜೀವ ಉಳಿದಿದ್ದು, ಅವರ ಕಾರ್ಯಕ್ಕೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು: ಪಾರಿವಾಳ ಕದ್ದಿದ್ದಾನೆ ಎಂದು ಆರೋಪಿಸಿ ಬಾಲಕನೊಬ್ಬನ ಮೇಲೆ ಮಾರಕಾಸ್ತ್ರದಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಶ್ರೀನಿವಾಸ ನಗರದಲ್ಲಿ ನಡೆದಿದೆ.
ಶಿವು ಅಲಿಯಾಸ್ ಬಸವ ಎಂಬಾತ ಪಾರಿವಾಳ ಸಾಕಾಣಿಕೆ ಮಾಡುತ್ತಿದ್ದ ಎನ್ನಲಾಗಿದೆ. ಇದೇ ಪ್ರದೇಶದ ಬಾಲಕನೊಬ್ಬ ಪಾರಿವಾಳ ಕದಿಯಲು ಬಂದಿದ್ದಾನೆ ಎಂದು ಆರೋಪಿಸಿ, ಆತನನ್ನು ಕಟ್ಟಿ ಹಾಕಿ ಶಿವು ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ.
ಹಲ್ಲೆಯಿಂದ ಬಾಲಕ ಗಾಯಗೊಂಡಿದ್ದು, ಘಟನೆ ಬಳಿಕ ಆರೋಪಿ ಶಿವು ಸ್ಥಳದಿಂದ ಪರಾರಿಯಾಗಿದ್ದಾನೆ. ಪ್ರಕರಣ ಸಂಬಂಧ ಕಾಮಾಕ್ಷಿಪಾಳ್ಯ ಪೊಲೀಸರು ಆರೋಪಿಗಾಗಿ ಶೋಧ ನಡೆಸುತ್ತಿದ್ದಾರೆ.
ಗದಗ: ಗದಗ ತಾಲೂಕನ್ನು ಬರಪೀಡಿತ ತಾಲೂಕು ಎಂದು ಘೋಷಿಸದಿರುವುದಕ್ಕೆ ರೈತರ ಆಕ್ರೋಶ ಕಟ್ಟೆಯೊಡೆದ ಬೆನ್ನಲ್ಲೇ ಶಾಸಕ ಎಚ್.ಕೆ. ಪಾಟೀಲ್ ಸರ್ಕಾರಕ್ಕೆ ಖಡಕ್ ಗಡುವು ನೀಡಿದ್ದಾರೆ.
ಅಕ್ಟೋಬರ್ 10ರೊಳಗೆ ಗದಗ ತಾಲೂಕನ್ನು ಬರಪೀಡಿತ ಎಂದು ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಅವರು ಘೋಷಿಸಿರುವುದು ಹೋರಾಟದ ಕಾವು ಮತ್ತಷ್ಟು ಹೆಚ್ಚಿಸಿದೆ.
ಗದಗ ತಾಲೂಕಿನ ಮುಳಗುಂದ ಪಟ್ಟಣದಲ್ಲಿ ಬರಪೀಡಿತ ತಾಲೂಕು ಘೋಷಣೆಗೆ ಆಗ್ರಹಿಸಿ ರೈತರು ಭಾನುವಾರ ಭಾರೀ ಪ್ರತಿಭಟನೆ ನಡೆಸಿದರು. ಪಟ್ಟಣದ ಗಣೇಶ ಗುಡಿಯಿಂದ ಬಸಾಪುರ ಕ್ರಾಸ್ವರೆಗೆ ಮೆರವಣಿಗೆ ನಡೆಸಿದ ರೈತರು, ಬಳಿಕ ಗದಗ–ಲಕ್ಷ್ಮೇಶ್ವರ ರಾಜ್ಯ ಹೆದ್ದಾರಿ ತಡೆದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಧಿಕ್ಕಾರ ಕೂಗಿ ಅಸಮಾಧಾನ ಹೊರಹಾಕಿದರು.
ರೈತರ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಎಚ್.ಕೆ. ಪಾಟೀಲ್, ಹೋರಾಟಕ್ಕೆ ಬೆಂಬಲ ಸೂಚಿಸುವುದರ ಜೊತೆಗೆ ಸರ್ಕಾರದ ಕ್ರಮದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗದಗ ತಾಲೂಕಿನಲ್ಲಿ ಶೇ.49ರಷ್ಟು ಮಳೆ ಕೊರತೆಯಾಗಿದ್ದರೂ, ಸರ್ಕಾರದ ಮೂರನೇ ಹಂತದ ಬರಪೀಡಿತ ತಾಲೂಕುಗಳ ಪಟ್ಟಿಯಲ್ಲಿ ಗದಗವನ್ನು ಕೈಬಿಟ್ಟಿರುವುದಕ್ಕೆ ಅವರು ಪ್ರಶ್ನೆ ಎತ್ತಿದರು.
ಜಿಲ್ಲಾಉಸ್ತುವಾರಿ ಸಚಿವರು ಹಾಗೂ ಶಾಸಕರ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ನಡೆಸಿ ಗದಗದ ಬರ ಪರಿಸ್ಥಿತಿಯ ಕುರಿತು ಚರ್ಚಿಸಲಾಗಿತ್ತು. ಅಧಿಕಾರಿಗಳ ವರದಿ ಬಳಿಕ ಮುಖ್ಯಮಂತ್ರಿಗಳು ಗದಗ ಜಿಲ್ಲೆಗೆ ಭೇಟಿ ನೀಡಿ ಕದಾಂಪುರದಿಂದ ಕುರ್ತಕೋಟಿವರೆಗೆ ಬೆಳೆ ಹಾನಿ ವೀಕ್ಷಣೆ ನಡೆಸಿದ್ದರು. ಇಷ್ಟೆಲ್ಲಾ ಆದರೂ ಗದಗ ತಾಲೂಕನ್ನು ಬರಪೀಡಿತ ಎಂದು ಘೋಷಣೆ ಮಾಡದಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ ಎಂದು ಎಚ್.ಕೆ. ಪಾಟೀಲ್ ಹೇಳಿದರು.
ರೈತರ ಪರಿಸ್ಥಿತಿ ತನಗೆ ಅರಿವಿದ್ದು, ರೈತ ಕುಟುಂಬದಿಂದ ಬಂದವನಾಗಿ ಅವರ ಸಂಕಷ್ಟವನ್ನು ಅರ್ಥಮಾಡಿಕೊಂಡಿದ್ದೇನೆ ಎಂದು ಹೇಳಿದ ಅವರು, ಗದಗ ತಾಲೂಕನ್ನು ಬರಪೀಡಿತ ಎಂದು ಘೋಷಿಸಲು ಸರ್ಕಾರದ ಮಟ್ಟದಲ್ಲಿ ಅಗತ್ಯ ಪ್ರಯತ್ನ ನಡೆಸುವುದಾಗಿ ತಿಳಿಸಿದರು.
ಮೂರು ದಿನಗಳಲ್ಲಿ ಘೋಷಣೆ ಮಾಡುವ ನಿಟ್ಟಿನಲ್ಲಿ ಪ್ರಯತ್ನಿಸುವುದಾಗಿ ಹೇಳಿದ ಅವರು, ಅದು ಸಾಧ್ಯವಾಗದಿದ್ದರೆ ವಿಧಾನಸಭೆಯ ಮೂಲಕ ಸರ್ಕಾರಕ್ಕೆ ಅಕ್ಟೋಬರ್ 10ರ ಗಡುವು ನೀಡುವುದಾಗಿ ಸ್ಪಷ್ಟಪಡಿಸಿದರು. ಆ ಗಡುವಿನೊಳಗೆ ಗದಗ ತಾಲೂಕು ಬರಪೀಡಿತ ಎಂದು ಘೋಷಣೆಯಾಗದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದರು.
ಇದೇ ವೇಳೆ ಉತ್ತರ ಕರ್ನಾಟಕದ 73 ತಾಲೂಕುಗಳ ಪೈಕಿ 27 ತಾಲೂಕುಗಳನ್ನು ಬರಪೀಡಿತ ತಾಲೂಕುಗಳ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಎಚ್.ಕೆ. ಪಾಟೀಲ್ ತಿಳಿಸಿದರು. ಗದಗ ಸೇರಿದಂತೆ ಉತ್ತರ ಕರ್ನಾಟಕದ ಉಳಿದ ತಾಲೂಕುಗಳನ್ನೂ ಬರಪೀಡಿತ ತಾಲೂಕುಗಳೆಂದು ಘೋಷಿಸಿ ರೈತರಿಗೆ ಪರಿಹಾರ ಕಲ್ಪಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.
ಬರ ಘೋಷಣೆಗೆ ಆಗ್ರಹಿಸಿ ನಡೆದ ರೈತರ ಹೆದ್ದಾರಿ ತಡೆ ಪ್ರತಿಭಟನೆಯಿಂದ ಮುಳಗುಂದದಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು. ರೈತರ ಹೋರಾಟಕ್ಕೆ ಶಾಸಕ ಎಚ್.ಕೆ. ಪಾಟೀಲ್ ನೀಡಿದ ರಾಜೀನಾಮೆ ಗಡುವು ಇದೀಗ ಸರ್ಕಾರದ ಮುಂದಿನ ನಿರ್ಧಾರದತ್ತ ಗಮನ ಸೆಳೆದಿದೆ.
ಆನೇಕಲ್: ರಾತ್ರಿ ಸುರಿದ ಭಾರೀ ಮಳೆಯಿಂದ ಬೆಂಗಳೂರು-ಹೊಸೂರು ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ.
ಹಳೆ ಚಂದಾಪುರ ರೈಲ್ವೆ ಬ್ರಿಡ್ಜ್ ಬಳಿ ಮಳೆ ನೀರು ರಸ್ತೆಯಲ್ಲಿ ನಿಂತಿದ್ದು, ಕೆಸರು ಉಂಟಾಗಿ ವಾಹನ ಸವಾರರು ಪರದಾಡುವಂತಾಗಿದೆ.
ಹಳೆ ಚಂದಾಪುರದ ಬಳಿ ಕಳೆದ ಒಂದು ವರ್ಷದಿಂದ ಹೆದ್ದಾರಿ ಕಾಮಗಾರಿ ನಡೆಯುತ್ತಿದೆ. ಕಾಮಗಾರಿ ಪೂರ್ಣಗೊಂಡಿಲ್ಲದ ಹಿನ್ನೆಲೆಯಲ್ಲಿ ಮಳೆ ನೀರು ರಸ್ತೆಯಲ್ಲೇ ನಿಂತು, ಸಂಚಾರಕ್ಕೆ ಅಡ್ಡಿಯಾಗಿದೆ. ಪರಿಣಾಮ ಹೆದ್ದಾರಿಯಲ್ಲಿ ಕಿಲೋಮೀಟರ್ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಂತಿದ್ದವು.
ಗಂಟೆಗಟ್ಟಲೆ ಟ್ರಾಫಿಕ್ನಲ್ಲಿ ಸಿಲುಕಿದ ವಾಹನ ಸವಾರರು ತೀವ್ರ ತೊಂದರೆ ಅನುಭವಿಸಿದ್ದಾರೆ. ಪರಿಸ್ಥಿತಿ ನಿಯಂತ್ರಿಸಲು ಸೂರ್ಯನಗರ ಪೊಲೀಸರು ಸ್ಥಳದಲ್ಲಿ ಸಂಚಾರ ನಿರ್ವಹಣೆ ಮಾಡಿದ್ದಾರೆ.
ಪ್ರತಿದಿನ ಕಾಮಗಾರಿ ಹಾಗೂ ಟ್ರಾಫಿಕ್ ಸಮಸ್ಯೆಯಿಂದ ತೊಂದರೆ ಅನುಭವಿಸುತ್ತಿರುವ ವಾಹನ ಸವಾರರು, ಹೆದ್ದಾರಿ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ ಶಾಶ್ವತ ಪರಿಹಾರ ಕಲ್ಪಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.
ಬೆಂಗಳೂರು: ನಡುರಸ್ತೆಯಲ್ಲೇ ಲಾಂಗ್ ಹಿಡಿದು ಓಡಾಡಿ ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸಿದ್ದ ಇಬ್ಬರು ಯುವಕರನ್ನು ತಿಲಕ್ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ನದೀಂ ಹಾಗೂ ಜುನೈದ್ ಎಂದು ಗುರುತಿಸಲಾಗಿದೆ. ಇತ್ತೀಚೆಗೆ ಜಯನಗರದ 9ನೇ ಬ್ಲಾಕ್ನಲ್ಲಿ ಇಬ್ಬರು ಲಾಂಗ್ ಹಿಡಿದು ಸಾರ್ವಜನಿಕರಿಗೆ ಭಯ ಹುಟ್ಟಿಸುವ ರೀತಿಯಲ್ಲಿ ಓಡಾಡಿದ್ದರು ಎನ್ನಲಾಗಿದೆ.
ಈ ದೃಶ್ಯಗಳನ್ನು ಸ್ಥಳೀಯರು ಮೊಬೈಲ್ನಲ್ಲಿ ಸೆರೆಹಿಡಿದಿದ್ದು, ಬಳಿಕ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.
ವಿಡಿಯೋ ವೈರಲ್ ಆಗುತ್ತಿದ್ದಂತೆ ಕಾರ್ಯಾಚರಣೆಗೆ ಇಳಿದ ತಿಲಕ್ ನಗರ ಪೊಲೀಸರು, ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದರು. ಇದೀಗ ಇಬ್ಬರನ್ನೂ ಬಂಧಿಸಿ, ಪ್ರಕರಣ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಪೊಲೀಸರ ತ್ವರಿತ ಕಾರ್ಯಾಚರಣೆಯಿಂದ ಸ್ಥಳೀಯರು ಹಾಗೂ ವ್ಯಾಪಾರಿಗಳು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.