ಕೊಪ್ಪಳ: ಕರ್ನಾಟಕ ಸೇರಿದಂತೆ ಮೂರು ರಾಜ್ಯಗಳ ಕೋಟ್ಯಂತರ ರೈತರ ಜೀವನಾಡಿಯಾಗಿರುವ ತುಂಗಭದ್ರಾ ಜಲಾಶಯಕ್ಕೆ ಹೊಸ ಕಳೆ ಬಂದಿದ್ದು, ಜಲಾಶಯದ 33 ನೂತನ ಕ್ರಸ್ಟ್ ಗೇಟ್ಗಳ ಲೋಕಾರ್ಪಣೆ ಕಾರ್ಯಕ್ರಮ ಇಂದು ನಡೆಯಲಿದೆ.
ಕಳೆದ ವರ್ಷ 19ನೇ ಕ್ರಸ್ಟ್ ಗೇಟ್ ಹರಿದು ಹೋಗಿದ್ದ ಹಿನ್ನೆಲೆಯಲ್ಲಿ ಉಂಟಾದ ಆತಂಕಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ರಾಜ್ಯ ಸರ್ಕಾರ ಎಲ್ಲಾ 33 ಗೇಟ್ಗಳನ್ನು ಬದಲಾಯಿಸುವ ನಿರ್ಧಾರ ಕೈಗೊಂಡಿತ್ತು. ಜಲಸಂಪನ್ಮೂಲ ಇಲಾಖೆ ಸಮರೋಪಾದಿಯಲ್ಲಿ ಕಾಮಗಾರಿ ಪೂರ್ಣಗೊಳಿಸಿದ್ದು, ಸುಮಾರು ₹51 ಕೋಟಿ ವೆಚ್ಚದಲ್ಲಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ಹೊಸ ಗೇಟ್ಗಳನ್ನು ಅಳವಡಿಸಲಾಗಿದೆ.
2024ರ ಆಗಸ್ಟ್ನಲ್ಲಿ ನಡೆದ ಗೇಟ್ ದುರಂತದಿಂದ ಲಕ್ಷಾಂತರ ಕ್ಯೂಸೆಕ್ ನೀರು ನದಿಗೆ ಹರಿದು ಹೋಗಿತ್ತು. ಕೊಪ್ಪಳ, ಬಳ್ಳಾರಿ, ರಾಯಚೂರು ಹಾಗೂ ವಿಜಯನಗರ ಜಿಲ್ಲೆಗಳ ರೈತರು ಆತಂಕಕ್ಕೊಳಗಾಗಿದ್ದರು. ಈ ಘಟನೆ ಬಳಿಕ ಸರ್ಕಾರ ಗಂಭೀರವಾಗಿ ಕ್ರಮ ಕೈಗೊಂಡು ಇಡೀ ಡ್ಯಾಂನ ಗೇಟ್ ವ್ಯವಸ್ಥೆಯನ್ನೇ ನವೀಕರಿಸುವ ಮಾಸ್ಟರ್ ಪ್ಲಾನ್ ರೂಪಿಸಿತ್ತು.
ಇಂದು ನಡೆಯಲಿರುವ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಕರ್ನಾಟಕ, ಆಂಧ್ರಪ್ರದೇಶ ಹಾಗೂ ತೆಲಂಗಾಣ ಮುಖ್ಯಮಂತ್ರಿಗಳು ಒಂದೇ ವೇದಿಕೆಯಲ್ಲಿ ಭಾಗವಹಿಸಲಿದ್ದು, ಕೇಂದ್ರ ಜಲಶಕ್ತಿ ಸಚಿವರೂ ಉಪಸ್ಥಿತರಿರುವರು. ಜಲಾಶಯದ ಮೇಲೆಯೇ ಗೇಟ್ಗಳ ಉದ್ಘಾಟನೆ ನಡೆಯಲಿದ್ದು, ಬಳಿಕ 10 ಸಾವಿರಕ್ಕೂ ಹೆಚ್ಚು ಆಸನಗಳ ವ್ಯವಸ್ಥೆಯಿರುವ ಬೃಹತ್ ವೇದಿಕೆಯಲ್ಲಿ ಮುಖ್ಯ ಕಾರ್ಯಕ್ರಮ ಜರುಗಲಿದೆ.
ಸರ್ಕಾರದ ಪರವಾಗಿ ಶಾಸಕ ಬಸವರಾಜ್ ರಾಯರೆಡ್ಡಿ ನೇತೃತ್ವದ ನಿಯೋಗ ನೆರೆಯ ರಾಜ್ಯಗಳಿಗೆ ತೆರಳಿ ಮುಖ್ಯಮಂತ್ರಿಗಳಿಗೆ ಆಹ್ವಾನ ನೀಡಿತ್ತು.
ಒಂದು ಕಡೆ ಡ್ಯಾಂನ ಗೇಟ್ಗಳ ನವೀಕರಣ ನಾಲ್ಕು ಜಿಲ್ಲೆಗಳ ರೈತರಿಗೆ ನೆಮ್ಮದಿ ತಂದಿದ್ದರೂ, ಮತ್ತೊಂದೆಡೆ ಜಲಾಶಯದಲ್ಲಿನ ನೀರಿನ ಪ್ರಮಾಣ ಮಾತ್ರ ಚಿಂತೆ ಹುಟ್ಟಿಸಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಜಲಾಶಯದಲ್ಲಿ 45 ಟಿಎಂಸಿ ನೀರು ಸಂಗ್ರಹವಾಗಿದ್ದರೆ, ಪ್ರಸ್ತುತ ಕೇವಲ 9 ಟಿಎಂಸಿ ನೀರು ಮಾತ್ರ ಲಭ್ಯವಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮುಂದಿನ ದಿನಗಳಲ್ಲಿ ಉತ್ತಮ ಮಳೆಯಾದರೆ ಮಾತ್ರ ಜಲಾಶಯ ತುಂಬಿ ರೈತರಲ್ಲಿ ಮತ್ತೊಮ್ಮೆ ಆಶಾಭಾವನೆ ಮೂಡಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

