Home Blog

ಮನೆ ಮುಂದೆ ಆಟವಾಡುತ್ತಿದ್ದ 3 ವರ್ಷದ ಬಾಲಕಿ ಅನುಮಾನಾಸ್ಪದ ಸಾವು; ಮಲತಾಯಿ ಮೇಲೆ ಕೊಲೆ ಆರೋಪ!

0

ನೆಲಮಂಗಲ: ಮನೆ ಮುಂದೆ ಆಟವಾಡುತ್ತಿದ್ದ ಮೂರು ವರ್ಷದ ಬಾಲಕಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ತೋಟದಗುಡ್ಡಹಳ್ಳಿಯಲ್ಲಿ ನಡೆದಿದೆ.

ಲಿಕ್ಷಿತಾ (3) ಮೃತ ಬಾಲಕಿ. ಮಗುವಿನ ಸಾವಿನ ಹಿಂದೆ ಮಲತಾಯಿ ಗಿರಿಜಾ ಕೈವಾಡವಿದೆ ಎಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ.

ಮಗುವಿನ ದೇಹದ ಮೇಲೆ ಬರೆ ಹಾಗೂ ಗಾಯದ ಗುರುತುಗಳು ಪತ್ತೆಯಾಗಿರುವುದು ಸಾವಿನ ಬಗ್ಗೆ ಹಲವು ಅನುಮಾನಗಳಿಗೆ ಕಾರಣವಾಗಿದೆ. ಘಟನೆ ಬಳಿಕ ಆಕ್ರೋಶಗೊಂಡ ಕುಟುಂಬಸ್ಥರು ಗಿರಿಜಾ ಮೇಲೆ ಹಲ್ಲೆಗೆ ಮುಂದಾಗಿದ್ದು, ಸ್ಥಳಕ್ಕೆ ಬಂದ ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ.

ಮೃತ ಬಾಲಕಿಯ ತಾಯಿ ಅನಾರೋಗ್ಯದಿಂದ ಮೃತಪಟ್ಟ ಬಳಿಕ ತಂದೆ ಜಗದೀಶ್, ಗಿರಿಜಾ ಜೊತೆ ವಾಸವಾಗಿದ್ದರು ಎನ್ನಲಾಗಿದೆ. ಜಗದೀಶ್ ಫೈನಾನ್ಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಕಳೆದ ಸುಮಾರು 20 ದಿನಗಳಿಂದ ಗಿರಿಜಾ ಹಾಗೂ ಲಿಕ್ಷಿತಾ ಜೊತೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು ಎಂದು ತಿಳಿದುಬಂದಿದೆ.

ಗಿರಿಜಾ ಅವರಿಗೂ ಈ ಹಿಂದೆ ಮದುವೆಯಾಗಿತ್ತು ಎನ್ನಲಾಗಿದ್ದು, ಬಳಿಕ ಜಗದೀಶ್ ಜೊತೆ ವಾಸವಾಗಿದ್ದರು. ಇಬ್ಬರೂ ಗಂಡ-ಹೆಂಡತಿ ಎಂದು ಹೇಳಿಕೊಂಡು ಬಾಡಿಗೆ ಮನೆಯಲ್ಲಿ ನೆಲೆಸಿದ್ದರು ಎನ್ನಲಾಗಿದೆ.

ಮೂರು ವರ್ಷದ ಬಾಲಕಿಯ ಅನುಮಾನಾಸ್ಪದ ಸಾವಿನಿಂದ ಕುಟುಂಬಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಮಲತಾಯಿಯೇ ಮಗುವನ್ನು ಕೊಲೆ ಮಾಡಿದ್ದಾಳೆ ಎಂದು ಆರೋಪಿಸಿದ್ದಾರೆ. ಈ ಆರೋಪದ ಹಿನ್ನೆಲೆಯಲ್ಲಿ ಮನೆ ಬಳಿ ಗಲಾಟೆ ಉಂಟಾಗಿ, ಪರಿಸ್ಥಿತಿ ಕೈ ಕೈ ಮಿಲಾಯಿಸುವ ಹಂತಕ್ಕೂ ತಲುಪಿತ್ತು. ಪೊಲೀಸರು ಮಧ್ಯಪ್ರವೇಶಿಸಿ ಗಲಾಟೆಯನ್ನು ನಿಯಂತ್ರಿಸಿದ್ದಾರೆ.

ಮಗುವಿನ ಸಾವಿಗೆ ನಿಖರ ಕಾರಣವೇನು ಎಂಬುದು ತನಿಖೆಯಿಂದ ತಿಳಿದುಬರಬೇಕಿದೆ. ಘಟನೆ ಸಂಬಂಧ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಊಟ ತಿಂದಾಕ್ಷಣ ಮಲಗೋ ಅಭ್ಯಾಸ ಇದ್ಯಾ!? ಎಚ್ಚರ, ಗ್ಯಾಸ್-ಆಸಿಡಿಟಿ ಹೆಚ್ಚಾಗಲು ಇದು ಕಾರಣವಾಗಬಹುದು

0

ಬೆಳಗ್ಗೆ ಎದ್ದ ತಕ್ಷಣ ಹೊಟ್ಟೆ ಉಬ್ಬರ, ಗ್ಯಾಸ್, ಆಸಿಡಿಟಿ ಹಾಗೂ ಅಜೀರ್ಣದಂತಹ ಸಮಸ್ಯೆಗಳು ಕಾಣಿಸಿಕೊಳ್ಳುವುದು ಹಲವರಲ್ಲಿ ಸಾಮಾನ್ಯವಾಗಿದೆ.

ಬದಲಾಗುತ್ತಿರುವ ಜೀವನಶೈಲಿ, ಸಮಯಕ್ಕೆ ಸರಿಯಾಗಿ ಊಟ ಮಾಡದಿರುವುದು, ಹೆಚ್ಚು ಎಣ್ಣೆ ಹಾಗೂ ಮಸಾಲೆಯುಕ್ತ ಆಹಾರ ಸೇವನೆ, ಜಂಕ್ ಫುಡ್ ಸೇವನೆ ಮತ್ತು ಕಡಿಮೆ ನೀರು ಕುಡಿಯುವುದು ಜೀರ್ಣಕ್ರಿಯೆಯ ಮೇಲೆ ಪರಿಣಾಮ ಬೀರಬಹುದು.

ಇಂತಹ ಸಮಸ್ಯೆಗಳಿಗೆ ಕೆಲವರು ಮನೆಯಲ್ಲೇ ಸಿಗುವ ಧನಿಯಾ ಮತ್ತು ಶುಂಠಿಯನ್ನು ಬಳಸಿ ಪಾನೀಯ ತಯಾರಿಸಿಕೊಂಡು ಸೇವಿಸುತ್ತಾರೆ. ಧನಿಯಾ-ಶುಂಠಿ ನೀರು ಜೀರ್ಣಕ್ರಿಯೆಗೆ ಸಹಾಯ ಮಾಡಬಹುದು ಎಂದು ಕೆಲವರು ನಂಬುತ್ತಾರೆ. ಆದರೆ ಇದನ್ನು ಸೇವಿಸಿದರೆ ಗ್ಯಾಸ್, ಆಸಿಡಿಟಿ ಅಥವಾ ಹೊಟ್ಟೆ ನೋವು ಎರಡು ದಿನಗಳಲ್ಲಿ ಸಂಪೂರ್ಣವಾಗಿ ನಿವಾರಣೆಯಾಗುತ್ತದೆ ಎಂಬುದಕ್ಕೆ ಸಾಕಷ್ಟು ವೈಜ್ಞಾನಿಕ ಸಾಕ್ಷ್ಯವಿಲ್ಲ.

ಧನಿಯಾ-ಶುಂಠಿ ನೀರು ತಯಾರಿಸುವುದು ಹೇಗೆ?

ಮೊದಲು ಒಂದು ಚಮಚ ಧನಿಯಾವನ್ನು ಸ್ವಲ್ಪ ಹುರಿದುಕೊಂಡು ನೀರಿಗೆ ಹಾಕಬೇಕು. ನಂತರ ಸಣ್ಣ ತುಂಡು ಶುಂಠಿಯನ್ನು ಸೇರಿಸಿ ಕೆಲವು ನಿಮಿಷ ಕುದಿಸಬೇಕು. ಬಳಿಕ ನೀರನ್ನು ಸೋಸಿ ಬೆಚ್ಚಗಿರುವಾಗ ಸೇವಿಸಬಹುದು. ರುಚಿಗಾಗಿ ಕೆಲವರು ಸ್ವಲ್ಪ ಜೇನುತುಪ್ಪವನ್ನೂ ಸೇರಿಸುತ್ತಾರೆ.

ಶುಂಠಿಯನ್ನು ಹಲವು ವರ್ಷಗಳಿಂದ ಜೀರ್ಣಕ್ರಿಯೆಗೆ ಸಂಬಂಧಿಸಿದ ಕೆಲವು ಸಮಸ್ಯೆಗಳಿಗೆ ಬಳಸಲಾಗುತ್ತಿದೆ. ಆದರೂ ಯಾವುದೇ ಮನೆಮದ್ದನ್ನು ನಿಯಮಿತವಾಗಿ ಸೇವಿಸುವ ಮೊದಲು ಅದರ ಪರಿಣಾಮ ಮತ್ತು ವೈಯಕ್ತಿಕ ಆರೋಗ್ಯ ಪರಿಸ್ಥಿತಿಯನ್ನು ಗಮನಿಸುವುದು ಮುಖ್ಯ.

ಗ್ಯಾಸ್, ಆಸಿಡಿಟಿ ಕಡಿಮೆಯಾಗಲು ಏನು ಮಾಡಬೇಕು?

ಜೀರ್ಣಕ್ರಿಯೆ ಉತ್ತಮವಾಗಿರಲು ಆಹಾರ ಪದ್ಧತಿಯಲ್ಲಿ ಕೆಲವು ಬದಲಾವಣೆ ಮಾಡಿಕೊಳ್ಳುವುದು ಮುಖ್ಯ. ಹೆಚ್ಚು ಎಣ್ಣೆಯುಕ್ತ ಮತ್ತು ಮಸಾಲೆಯುಕ್ತ ಆಹಾರವನ್ನು ಕಡಿಮೆ ಮಾಡಬೇಕು. ಅತಿಯಾದ ಕಾಫಿ, ಚಹಾ ಹಾಗೂ ಕಾರ್ಬೊನೇಟೆಡ್ ಪಾನೀಯಗಳ ಸೇವನೆಯನ್ನೂ ನಿಯಂತ್ರಿಸುವುದು ಸಹಾಯಕವಾಗಬಹುದು.

ಊಟವನ್ನು ನಿಧಾನವಾಗಿ ಸೇವಿಸುವುದು, ಸಾಕಷ್ಟು ನೀರು ಕುಡಿಯುವುದು ಮತ್ತು ಊಟ ಮಾಡಿದ ತಕ್ಷಣ ಮಲಗದೆ ಇರುವುದು ಉತ್ತಮ ಅಭ್ಯಾಸವಾಗಿದೆ. ನಿಯಮಿತ ಸಮಯಕ್ಕೆ ಊಟ ಮಾಡುವುದಕ್ಕೂ ಆದ್ಯತೆ ನೀಡಬೇಕು.

ಪದೇಪದೇ ಸಮಸ್ಯೆ ಕಾಣಿಸಿಕೊಂಡರೆ ಎಚ್ಚರ:

ಗ್ಯಾಸ್ ಅಥವಾ ಆಸಿಡಿಟಿ ಪದೇಪದೇ ಕಾಣಿಸಿಕೊಳ್ಳುತ್ತಿದ್ದರೆ ಕೇವಲ ಮನೆಮದ್ದಿನ ಮೂಲಕ ಸಮಸ್ಯೆಯನ್ನು ನಿಯಂತ್ರಿಸಲು ಪ್ರಯತ್ನಿಸುವ ಬದಲು ಅದರ ಮೂಲ ಕಾರಣವನ್ನು ಪತ್ತೆಹಚ್ಚುವುದು ಅಗತ್ಯ.

ನಿರಂತರ ಎದೆ ಉರಿ, ತೀವ್ರ ಹೊಟ್ಟೆ ನೋವು, ವಾಂತಿ, ನುಂಗಲು ಕಷ್ಟ, ಕಾರಣವಿಲ್ಲದೆ ತೂಕ ಇಳಿಕೆಯಾಗುವುದು ಅಥವಾ ಮಲದಲ್ಲಿ ರಕ್ತ ಕಾಣಿಸಿಕೊಳ್ಳುವಂತಹ ಲಕ್ಷಣಗಳು ಕಂಡುಬಂದರೆ ವೈದ್ಯರನ್ನು ಸಂಪರ್ಕಿಸಿ ಸೂಕ್ತ ಸಲಹೆ ಪಡೆಯಬೇಕು.

ರೇಣುಕಾಸ್ವಾಮಿ ಕೊಲೆ ಕೇಸ್: ಖುದ್ದು ಹಾಜರಾತಿಗೆ ದರ್ಶನ್ ಮನವಿ, ಸೆ.16ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್

0

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಸೆಷನ್ಸ್ ಕೋರ್ಟ್‌ನಲ್ಲಿ ಮುಂದುವರಿದಿರುವ ಬೆನ್ನಲ್ಲೇ, ವಿಚಾರಣೆಗೆ ಖುದ್ದು ಹಾಜರಾಗಲು ಅವಕಾಶ ನೀಡುವಂತೆ ನಟ ದರ್ಶನ್ ಸಲ್ಲಿಸಿರುವ ಅರ್ಜಿ ಹೈಕೋರ್ಟ್‌ನಲ್ಲಿ ವಿಚಾರಣೆಗೆ ಬಂದಿದೆ. ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಸೆಪ್ಟೆಂಬರ್ 16ಕ್ಕೆ ಮುಂದೂಡಿದೆ.

ಸೆಪ್ಟೆಂಬರ್ 10ರಂದು ನ್ಯಾಯಮೂರ್ತಿ ವಿ. ಶ್ರೀಶಾನಂದ ಅವರಿದ್ದ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಿತು. ದರ್ಶನ್ ಪರ ಹಿರಿಯ ವಕೀಲ ಹಷ್ಮತ್ ಪಾಷಾ ವಾದ ಮಂಡಿಸಿ, ಸಾಕ್ಷ್ಯ ವಿಚಾರಣೆ ನಡೆಯುವ ಸಂದರ್ಭದಲ್ಲಿ ಆರೋಪಿಗಳಿಗೆ ಖುದ್ದು ಹಾಜರಾಗಲು ಅವಕಾಶ ನೀಡಬೇಕು ಎಂದು ಮನವಿ ಮಾಡಿದರು.

ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸುವಾಗ ತಾಂತ್ರಿಕ ಕಾರಣಗಳಿಂದ ಸೂಕ್ತ ಸಂವಹನ ಸಾಧ್ಯವಾಗುತ್ತಿಲ್ಲ. ಪ್ರಮುಖ ಸಾಕ್ಷಿಗಳ ವಿಚಾರಣೆ ನಡೆಯುವ ಸಂದರ್ಭದಲ್ಲಾದರೂ ಆರೋಪಿಗಳನ್ನು ನ್ಯಾಯಾಲಯಕ್ಕೆ ಖುದ್ದು ಹಾಜರುಪಡಿಸಬೇಕು ಎಂದು ಅವರು ವಾದಿಸಿದರು.

ಈ ವೇಳೆ ನ್ಯಾಯಾಧೀಶರು, ವಿಡಿಯೋ ಕಾನ್ಫರೆನ್ಸ್‌ನಲ್ಲೇ ಆರೋಪಿ ಮತ್ತು ವಕೀಲರ ನಡುವೆ ಖಾಸಗಿ ಮಾತುಕತೆಗೆ ವ್ಯವಸ್ಥೆ ಮಾಡಬಹುದು ಎಂದು ಹೇಳಿದರು. ಕೋರ್ಟ್ ಕಲಾಪ ಆರಂಭವಾಗುವುದಕ್ಕೂ 15 ನಿಮಿಷ ಮುನ್ನ ಆರೋಪಿಗಳು ತಮ್ಮ ವಕೀಲರೊಂದಿಗೆ ಮಾತನಾಡಲು ಅವಕಾಶ ಕಲ್ಪಿಸಬಹುದು ಎಂದು ತಿಳಿಸಿದರು.

ಆರೋಪಿಗಳನ್ನು ನ್ಯಾಯಾಲಯಕ್ಕೆ ಖುದ್ದಾಗಿ ಕರೆತರಬೇಕಾದರೆ ಪೊಲೀಸರ ಭದ್ರತೆ ಒದಗಿಸಬೇಕಾಗುತ್ತದೆ. ಅಲ್ಲದೆ, ಜನದಟ್ಟಣೆಯನ್ನು ನಿಯಂತ್ರಿಸುವುದು ಕಷ್ಟವಾಗಬಹುದು ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿತು.

ಬೇಕಿದ್ದರೆ ಪರಪ್ಪನ ಅಗ್ರಹಾರ ಜೈಲಿನಲ್ಲೇ ಕೋರ್ಟ್ ವ್ಯವಸ್ಥೆ ಮಾಡಬಹುದು ಅಥವಾ ಅಲ್ಲಿಯೇ ವಿಚಾರಣೆ ನಡೆಸುವಂತೆ ಸೂಚನೆ ನೀಡಬಹುದು ಎಂದು ನ್ಯಾಯಾಧೀಶರು ತಿಳಿಸಿದರು. ಖುದ್ದು ಹಾಜರಾತಿಗಿಂತ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸುವುದು ಹೆಚ್ಚು ಪರಿಣಾಮಕಾರಿಯಾಗಬಹುದು ಎಂದೂ ಅಭಿಪ್ರಾಯಪಟ್ಟರು.

ಟ್ರಯಲ್ ಪ್ರಕ್ರಿಯೆಯನ್ನು ಸೌಹಾರ್ದಯುತವಾಗಿ ಪೂರ್ಣಗೊಳಿಸುವ ಅಗತ್ಯವಿದೆ. ಎರಡೂ ಕಡೆಯ ವಕೀಲರು ಚರ್ಚಿಸಿ ಸೂಕ್ತ ತೀರ್ಮಾನಕ್ಕೆ ಬರುವಂತೆ ನ್ಯಾಯಾಲಯ ಸೂಚಿಸಿದೆ. ಪ್ರತಿಯೊಂದು ವಿಚಾರಣೆಯಲ್ಲೂ ಆರೋಪಿಗಳ ಖುದ್ದು ಹಾಜರಾತಿ ಅಗತ್ಯವಿಲ್ಲ. ಕ್ರಾಸ್ ಎಕ್ಸಾಮಿನೇಷನ್ ಯಾವಾಗ ನಡೆಯಲಿದೆ ಎಂಬುದನ್ನು ನ್ಯಾಯಾಲಯಕ್ಕೆ ತಿಳಿಸುವಂತೆ ಸೂಚಿಸಿ ವಿಚಾರಣೆಯನ್ನು ಸೆಪ್ಟೆಂಬರ್ 16ಕ್ಕೆ ಮುಂದೂಡಲಾಗಿದೆ.

ದರ್ಶನ್ ಪರ ವಕೀಲರ ವಾದವೇನು?

ಸಾಕ್ಷ್ಯ ವಿಚಾರಣೆ ನಡೆಯುವ ಸಂದರ್ಭದಲ್ಲಿ ಆರೋಪಿಗೆ ಖುದ್ದು ಹಾಜರಾಗುವ ಅವಕಾಶ ನೀಡಬೇಕು. ಸಾಕ್ಷ್ಯವನ್ನು ನೇರವಾಗಿ ಆಲಿಸುವುದು ಹಾಗೂ ವೀಕ್ಷಿಸುವುದು ಆರೋಪಿಯ ಹಕ್ಕು ಎಂದು ದರ್ಶನ್ ಪರ ವಕೀಲರು ವಾದಿಸಿದ್ದಾರೆ.

ಪರಪ್ಪನ ಅಗ್ರಹಾರ ಜೈಲು ಮತ್ತು ನ್ಯಾಯಾಲಯದಲ್ಲಿ ವಿಡಿಯೋ ಕಾನ್ಫರೆನ್ಸ್‌ಗೆ ಅಗತ್ಯವಿರುವ ಸೂಕ್ತ ಉಪಕರಣಗಳಿಲ್ಲ. ತಾಂತ್ರಿಕ ವ್ಯವಸ್ಥೆಗಳನ್ನು ಇನ್ನೂ ಸಮರ್ಪಕವಾಗಿ ಉನ್ನತೀಕರಿಸಲಾಗಿಲ್ಲ. ಈ ಕಾರಣದಿಂದ ಕಾಲಕಾಲಕ್ಕೆ ತಮ್ಮ ವಕೀಲರಿಗೆ ಸೂಕ್ತ ಸೂಚನೆಗಳನ್ನು ನೀಡಲು ಸಾಧ್ಯವಾಗುತ್ತಿಲ್ಲ. ವಿಡಿಯೋ ಕಾನ್ಫರೆನ್ಸ್‌ನಲ್ಲೂ ತಾಂತ್ರಿಕ ಅಡಚಣೆಗಳು ಎದುರಾಗುತ್ತಿವೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಈ ಹಿನ್ನೆಲೆಯಲ್ಲಿ ದರ್ಶನ್ ಅವರನ್ನು ವಿಚಾರಣೆಗೆ ಖುದ್ದು ಹಾಜರುಪಡಿಸುವಂತೆ ಜೈಲು ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂದು ಮನವಿ ಮಾಡಲಾಗಿತ್ತು. ಸೆಷನ್ಸ್ ಕೋರ್ಟ್ ಈ ಅರ್ಜಿಯನ್ನು ವಜಾಗೊಳಿಸಿದ ಬಳಿಕ ದರ್ಶನ್ ಪರವಾಗಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗಿತ್ತು.

ಚಿಕ್ಕಬಳ್ಳಾಪುರ: ಬಾವಿಗೆ ಬಿದ್ದು ಮಹಿಳೆ ಅನುಮಾನಾಸ್ಪದ ಸಾವು!

0

ಚಿಕ್ಕಬಳ್ಳಾಪುರ: ಬಾವಿಗೆ ಬಿದ್ದು ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಕುಡುವತಿ ಗ್ರಾಮದಲ್ಲಿ ನಡೆದಿದೆ.

ಮೃತ ಮಹಿಳೆಯನ್ನು ಕಲ್ಪನಾ (39) ಎಂದು ಗುರುತಿಸಲಾಗಿದೆ. ಸುಮಾರು 20 ವರ್ಷಗಳ ಹಿಂದೆ ಕುಡುವತಿ ಗ್ರಾಮದ ತಮ್ಮೇಗೌಡ ಎಂಬುವರೊಂದಿಗೆ ಕಲ್ಪನಾ ವಿವಾಹವಾಗಿದ್ದು, ದಂಪತಿಗೆ ಇಬ್ಬರು ಮಕ್ಕಳಿದ್ದಾರೆ.

ಇತ್ತೀಚೆಗೆ ಅನಾರೋಗ್ಯದ ಹಿನ್ನೆಲೆಯಲ್ಲಿ ಕಲ್ಪನಾ ಕುಡುವತಿ ಗ್ರಾಮದ ತಮ್ಮ ತವರು ಮನೆಯಲ್ಲಿದ್ದರು ಎನ್ನಲಾಗಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಬಾವಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಘಟನೆ ಮಾಹಿತಿ ತಿಳಿದು ಸ್ಥಳಕ್ಕೆ ನಂದಿಗಿರಿಧಾಮ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ನಂದಿಗಿರಿಧಾಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಮಹಿಳೆಯ ಸಾವಿನ ನಿಖರ ಕಾರಣದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ನಾನು ಏನೂ ಹೇಳಲ್ಲ, ಏನೂ ಮಾತಾಡಲ್ಲ. ನೀವು ಏನ್ ಬೇಕಾದ್ರೂ ಮಾಡ್ಕೊಳಿ: ಪೊಲೀಸರಿಗೇ ಪ್ರಜ್ವಲ್ ರೇವಣ್ಣಆವಾಜ್

0

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಇದ್ದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಬ್ಯಾರಕ್‌ನಲ್ಲಿ ಮೊಬೈಲ್ ಫೋನ್ ಪತ್ತೆಯಾದ ಪ್ರಕರಣದ ತನಿಖೆ ಚುರುಕುಗೊಂಡಿದೆ. ಮೊಬೈಲ್ ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಹಾಗೂ ಪ್ರತಾಪ್ ರಾಯ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಎರಡು ದಿನಗಳ ಪೊಲೀಸ್ ಕಸ್ಟಡಿ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಆರೋಪಿಗಳನ್ನು ಪೊಲೀಸರು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ಈ ವೇಳೆ 2ನೇ ಎಸಿಜೆಎಂ ನ್ಯಾಯಾಧೀಶರಾದ ಸಂದೀಪ್ ಪಾಟೀಲ್ ಅವರು ಇಬ್ಬರನ್ನೂ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದ್ದಾರೆ.

ಪೊಲೀಸರ ವಿಚಾರಣೆಗೆ ಪ್ರಜ್ವಲ್ ರೇವಣ್ಣ ಆಕ್ಷೇಪ?

ಪರಪ್ಪನ ಅಗ್ರಹಾರ ಪೊಲೀಸರ ವಿಚಾರಣೆ ವೇಳೆ ಪ್ರಜ್ವಲ್ ರೇವಣ್ಣ ಪೊಲೀಸರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ‘ಯಾರ ಜೊತೆಗೆ ಮಾತನಾಡುತ್ತಿದ್ದೀರಾ ನೀವು? ನಾನು ಮಾಜಿ ಸಂಸದ, ಮಾಜಿ ಪ್ರಧಾನಿ ಮೊಮ್ಮಗ. ಬೇಕಂತಲೇ ನನ್ನನ್ನು ಸಿಕ್ಕಿಸಲು ಯತ್ನಿಸುತ್ತಿದ್ದೀರಿ. ನನ್ನ ಜಾಮೀನು ರದ್ದುಗೊಳಿಸಲು ಸಾಕಷ್ಟು ಪ್ರಯತ್ನ ಮಾಡುತ್ತಿದ್ದೀರಿ’ ಎಂದು ಅವರು ಪೊಲೀಸರ ಮುಂದೆ ಹೇಳಿರುವುದಾಗಿ ವರದಿಯಾಗಿದೆ.

‘ನಾನು ಏನೂ ಹೇಳಲ್ಲ, ಏನೂ ಮಾತಾಡಲ್ಲ. ನೀವು ಏನ್ ಬೇಕಾದ್ರೂ ಮಾಡ್ಕೊಳಿ’ ಎಂದು ಪೊಲೀಸರಿಗೆ ಪ್ರಜ್ವಲ್ ರೇವಣ್ಣ ಹೇಳಿದ್ದಾರೆ ಎನ್ನಲಾಗಿದೆ. ಅಲ್ಲದೆ, ಈ ವಿಚಾರದಲ್ಲಿ ನ್ಯಾಯಾಲಯದ ಮೊರೆ ಹೋಗುವುದಾಗಿ ಹಾಗೂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ.

ಜೈಲಿನಲ್ಲಿ ಮೊಬೈಲ್ ಪತ್ತೆಯಾಗಿದ್ದು ಹೇಗೆ?

ಪ್ರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರೌಡಿ ನಿಗ್ರಹ ಪಡೆ ರಚಿಸಿರುವ ಹಿನ್ನೆಲೆಯಲ್ಲಿ, ಜೈಲಿನಲ್ಲಿರುವ ರೌಡಿಗಳು ಹೊರಗಿರುವ ರೌಡಿಗಳೊಂದಿಗೆ ಸಂಪರ್ಕದಲ್ಲಿದ್ದಾರೆ ಎಂಬ ಮಾಹಿತಿ ಪೊಲೀಸರಿಗೆ ಲಭ್ಯವಾಗಿತ್ತು. ಜೈಲಿನೊಳಗೆ ಅಕ್ರಮ ಚಟುವಟಿಕೆಗಳು ನಡೆಯುತ್ತಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಸಿಸಿಬಿ ಅಧಿಕಾರಿಗಳು ಆಗಸ್ಟ್ 11ರಂದು ಪರಪ್ಪನ ಅಗ್ರಹಾರ ಜೈಲಿನ ಮೇಲೆ ದಾಳಿ ನಡೆಸಿದ್ದರು.

ಈ ವೇಳೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಇದ್ದ ಬ್ಯಾರಕ್‌ನಲ್ಲಿ ಮೊಬೈಲ್ ಫೋನ್ ಪತ್ತೆಯಾಗಿತ್ತು. ಇದರಿಂದ ಜೈಲಿನೊಳಗೆ ಮೊಬೈಲ್ ಹೇಗೆ ಬಂತು, ಯಾರು ಅದನ್ನು ಬಳಸುತ್ತಿದ್ದರು ಹಾಗೂ ಮೊಬೈಲ್ ಮೂಲಕ ಯಾರೊಂದಿಗೆ ಸಂಪರ್ಕ ಹೊಂದಲಾಗಿತ್ತು ಎಂಬ ಹಲವು ಪ್ರಶ್ನೆಗಳು ತನಿಖೆಯ ವ್ಯಾಪ್ತಿಗೆ ಬಂದಿವೆ.

ಪ್ರಕರಣದ ತನಿಖೆಗಾಗಿ ಕಾರಾಗೃಹ ಮತ್ತು ಸುಧಾರಣೆ ಇಲಾಖೆ ಡಿಐಜಿ ಜಿನೇಂದ್ರ ಖನಗಾವಿ ನೇತೃತ್ವದಲ್ಲಿ ವಿಶೇಷ ತಂಡವನ್ನು ರಚಿಸಲಾಗಿತ್ತು. ಪರಪ್ಪನ ಅಗ್ರಹಾರ ಜೈಲಿನ ಬ್ಯಾರಕ್‌ಗೆ ಮೊಬೈಲ್ ಹೇಗೆ ಪ್ರವೇಶಿಸಿತು ಎಂಬುದರ ಕುರಿತು ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಕಾರಾಗೃಹ ಡಿಜಿಪಿ ಅಲೋಕ್ ಕುಮಾರ್ ಸೂಚಿಸಿದ್ದರು.

ಇದೀಗ ಪ್ರಜ್ವಲ್ ರೇವಣ್ಣ ಹಾಗೂ ಪ್ರತಾಪ್ ರಾಯ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಜೈಲಿನೊಳಗೆ ಮೊಬೈಲ್ ಬಳಕೆಯಾದ ಪ್ರಕರಣದ ತನಿಖೆ ಮುಂದುವರಿದಿದೆ.

ಹಿಂಗಾರು ಬೆಳೆ ಚೆನ್ನಾಗಿರುತ್ತೆ, ಆದರೆ ಸಾವು-ನೋವು ಹೆಚ್ಚಾಗಲಿವೆ: ಕೋಡಿಶ್ರೀಗಳ ಭವಿಷ್ಯ

0

ಹಾಸನ: ನೇಪಾಳದಲ್ಲಿ ಸಂಭವಿಸಿದ ರೀತಿಯ ಭೀಕರ ಪ್ರವಾಹದಂತಹ ಘಟನೆಗಳು ದಕ್ಷಿಣ ಭಾರತದಲ್ಲೂ ಸಂಭವಿಸುವ ಸಾಧ್ಯತೆಯಿದೆ ಎಂದು ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಸಮುದ್ರದ ನೀರು ನುಗ್ಗಿ ಊರುಗಳು ಮುಳುಗುವಂತಹ ಘಟನೆಗಳು ಸಂಭವಿಸಬಹುದು ಎಂದು ಎಚ್ಚರಿಕೆ ನೀಡಿರುವ ಅವರು, ಪ್ರಕೃತಿ ವಿಕೋಪಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸುವಂತೆ ತಿಳಿಸಿದ್ದಾರೆ.

ಹಾಸನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕೋಡಿಶ್ರೀ, ಈ ವರ್ಷದ ಮುಂಗಾರು ಮಳೆ ವಿರಳವಾಗಲಿದೆ ಹಾಗೂ ಹಿಂಗಾರು ಮಳೆ ಉತ್ತಮವಾಗಲಿದೆ ಎಂದು ತಾವು ಈ ಹಿಂದೆಯೇ ಹೇಳಿದ್ದಾಗಿ ತಿಳಿಸಿದ್ದಾರೆ. ಜನಜಂಗುಳಿ ಹೆಚ್ಚಾಗುವುದು, ಅನ್ನ, ಆಹಾರ ಮತ್ತು ನೀರಿನ ಕೊರತೆ ಎದುರಾಗುವುದು, ಸಾವು-ನೋವುಗಳು ಹೆಚ್ಚಾಗುವುದು ಹಾಗೂ ವಿಪರೀತ ಪ್ರವಾಹ ಸಂಭವಿಸುವ ಬಗ್ಗೆ ತಾವು ಭವಿಷ್ಯ ನುಡಿದಿದ್ದಾಗಿ ಹೇಳಿದ್ದಾರೆ.

ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ರೈತರು ಸಂಕಷ್ಟಕ್ಕೆ ಸಿಲುಕಿರುವ ಸಂದರ್ಭದಲ್ಲಿ ಹಿಂಗಾರು ಮಳೆ ಸಮೃದ್ಧಿಯಾಗಲಿದೆ ಎಂದು ಕೋಡಿಶ್ರೀ ಹೇಳಿದ್ದಾರೆ. ಹಿಂಗಾರು ಮಳೆ ಉತ್ತಮವಾಗಿ ಸುರಿದು ಕೆರೆ-ಕಟ್ಟೆಗಳು ತುಂಬಲಿವೆ. ಇದರಿಂದ ಹೆಚ್ಚಿನ ಸಮಸ್ಯೆ ಇರುವುದಿಲ್ಲ ಎಂದು ತಿಳಿಸಿದ್ದಾರೆ.

ಹಿಂಗಾರು ಮಳೆಯಿಂದ ಶೇ.90ರಷ್ಟು ಜನರಿಗೆ ಪರಿಹಾರ ಸಿಗುವ ಸಾಧ್ಯತೆ ಇದೆ ಎಂದು ರೈತರಿಗೆ ಆಶಾದಾಯಕ ಮಾತುಗಳನ್ನು ಹೇಳಿದ್ದಾರೆ. ಇದೇ ವೇಳೆ ನೇಪಾಳದಲ್ಲಿ ನಡೆದಿರುವ ಘಟನೆಗಳ ರೀತಿಯಲ್ಲೇ ದಕ್ಷಿಣ ಭಾರತದಲ್ಲೂ ಸಾವು-ನೋವು, ದುಃಖ ಹಾಗೂ ಊರುಗಳು ಕೊಚ್ಚಿಹೋಗುವಂತಹ ಘಟನೆಗಳು ಸಂಭವಿಸುವ ಲಕ್ಷಣಗಳಿವೆ ಎಂದು ಕೋಡಿಶ್ರೀ ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ಮುನ್ನೆಚ್ಚರಿಕೆ ವಹಿಸುವ ಅಗತ್ಯವಿದೆ ಎಂದು ಹೇಳಿದ್ದಾರೆ.

ಕಳೆದ ಎರಡ್ಮೂರು ವರ್ಷಗಳಿಂದ ತಾವು ದೇಶ ಹಾಗೂ ವಿಶ್ವದಲ್ಲಿ ಸಂಭವಿಸಬಹುದಾದ ಹಲವು ಬೆಳವಣಿಗೆಗಳ ಬಗ್ಗೆ ಹೇಳುತ್ತಲೇ ಬಂದಿರುವುದಾಗಿ ಅವರು ತಿಳಿಸಿದ್ದಾರೆ. ದೇಶಗಳು ಮುಳುಗುವಂತಹ ಪರಿಸ್ಥಿತಿ, ವಿಪರೀತ ನೀರು, ಜನಜಂಗುಳಿ ಹಾಗೂ ಯುದ್ಧದಂತಹ ಬೆಳವಣಿಗೆಗಳು ಸಂಭವಿಸುವ ಸಾಧ್ಯತೆಗಳ ಬಗ್ಗೆಯೂ ತಾವು ಈ ಹಿಂದೆ ಹೇಳಿದ್ದಾಗಿ ಕೋಡಿಶ್ರೀ ಹೇಳಿದ್ದಾರೆ.

ಪ್ರಕೃತಿಗೆ ವಿರುದ್ಧವಾಗಿ ನಡೆಯುತ್ತಿರುವ ಚಟುವಟಿಕೆಗಳಿಂದ ಪರಿಸರದ ಮೇಲೆ ಪರಿಣಾಮ ಬೀರುತ್ತಿದೆ. ಜಗತ್ತಿನಾದ್ಯಂತ ದೊಡ್ಡ ಪ್ರಮಾಣದಲ್ಲಿ ಬೋರ್‌ವೆಲ್‌ಗಳನ್ನು ಕೊರೆಯಲಾಗಿದ್ದು, ಇದರಿಂದ ಭೂಮಿಯ ಮೇಲ್ಮೈ ಮತ್ತು ಅಂತರ್ಜಲ ವ್ಯವಸ್ಥೆಯ ಮೇಲೆ ಪರಿಣಾಮ ಉಂಟಾಗಿದೆ. ಪರಿಣಾಮವಾಗಿ ಪ್ರವಾಹ ಹಾಗೂ ಭೂಮಿ ಕಂಪನದಂತಹ ಘಟನೆಗಳು ಹೆಚ್ಚಾಗುತ್ತಿವೆ ಎಂಬ ಅಭಿಪ್ರಾಯವನ್ನೂ ಕೋಡಿಶ್ರೀ ವ್ಯಕ್ತಪಡಿಸಿದ್ದಾರೆ.

ಕೇಂದ್ರಕ್ಕೆ ಸೆಡ್ಡು ಹೊಡೆದ ಕರ್ನಾಟಕ ಸರ್ಕಾರ; ‘ವಂದೇ ಮಾತರಂ’ ಗಾಯನದ ಬಗ್ಗೆ ಮಹತ್ವದ ಆದೇಶ

0

ಬೆಂಗಳೂರು: ‘ವಂದೇ ಮಾತರಂ’ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರ ಮಹತ್ವದ ಆದೇಶ ಹೊರಡಿಸಿದ್ದು, ರಾಜ್ಯ ಸರ್ಕಾರದ ವಿವಿಧ ಕಾರ್ಯಕ್ರಮಗಳಲ್ಲಿ ಆರು ಚರಣಗಳ ಬದಲು ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲು ಸೂಚಿಸಿದೆ.

1937ರ ನಿರ್ಣಯದಂತೆ ವಂದೇ ಮಾತರಂ ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಬೇಕು ಎಂಬ ಕಾಂಗ್ರೆಸ್‌ನ ಹಿರಿಯ ನಾಯಕರ ಅಭಿಪ್ರಾಯಗಳ ಬೆನ್ನಲ್ಲೇ ರಾಜ್ಯ ಸರ್ಕಾರದ ಈ ನಿರ್ಧಾರ ಮಹತ್ವ ಪಡೆದುಕೊಂಡಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಕೂಡ ವಂದೇ ಮಾತರಂ ಗೀತೆಯ ಎಲ್ಲಾ ಆರು ಪ್ಯಾರಾಗಳನ್ನು ಹಾಡುವ ವಿಚಾರಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದರು ಎನ್ನಲಾಗಿದೆ.

ರಾಜ್ಯ ಸರ್ಕಾರದ ಆದೇಶದಲ್ಲಿ ಏನಿದೆ?

ಭಾರತದ ರಾಷ್ಟ್ರೀಯ ಚಳವಳಿಯ ಸಂದರ್ಭದಲ್ಲಿ ಜನರಲ್ಲಿ ರಾಷ್ಟ್ರೀಯತೆ, ಏಕತೆ ಹಾಗೂ ದೇಶಭಕ್ತಿಯ ಭಾವನೆ ಮೂಡಿಸುವಲ್ಲಿ ‘ವಂದೇ ಮಾತರಂ’ ಗೀತೆ ಪ್ರಮುಖ ಪಾತ್ರ ವಹಿಸಿದೆ ಎಂದು ಸರ್ಕಾರ ತನ್ನ ಆದೇಶದಲ್ಲಿ ಉಲ್ಲೇಖಿಸಿದೆ.

ಭಾರತ ಸರ್ಕಾರದ ಗೃಹ ವ್ಯವಹಾರಗಳ ಸಚಿವಾಲಯವು ವಂದೇ ಮಾತರಂನ ಅಧಿಕೃತ ಆವೃತ್ತಿ ಹಾಗೂ ವಿವಿಧ ಸರ್ಕಾರಿ ಮತ್ತು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಅದರ ಗಾಯನ ಅಥವಾ ವಾದನಕ್ಕೆ ಸಂಬಂಧಿಸಿದಂತೆ ಪಾಲಿಸಬೇಕಾದ ಮಾರ್ಗಸೂಚಿಗಳನ್ನು ಹೊರಡಿಸಿದೆ. ಈ ಮಾರ್ಗಸೂಚಿಗಳಲ್ಲಿ ಗೀತೆಯ ವಾದನ ಹಾಗೂ ಸಾಮೂಹಿಕ ಗಾಯನಕ್ಕೆ ಸಂಬಂಧಿಸಿದ ಸಂದರ್ಭಗಳನ್ನು ಪ್ರತ್ಯೇಕವಾಗಿ ವಿವರಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ರಾಜ್ಯದಲ್ಲಿ ನಡೆಯುವ ವಿವಿಧ ಸರ್ಕಾರಿ ಕಾರ್ಯಕ್ರಮಗಳು ಮತ್ತು ಸಮಾರಂಭಗಳ ಸ್ವರೂಪ ಹಾಗೂ ಸಂದರ್ಭಕ್ಕೆ ಅನುಗುಣವಾಗಿ ವಂದೇ ಮಾತರಂ ಗೀತೆಯ ವಾದನ ಅಥವಾ ಗಾಯನದಲ್ಲಿ ಏಕರೂಪತೆ, ಗೌರವ ಹಾಗೂ ಸೂಕ್ತ ಶಿಷ್ಟಾಚಾರವನ್ನು ಕಾಯ್ದುಕೊಳ್ಳುವ ಅಗತ್ಯವಿದೆ ಎಂದು ಸರ್ಕಾರ ಹೇಳಿದೆ.

ಈ ಹಿನ್ನೆಲೆಯಲ್ಲಿ ಸಚಿವ ಸಂಪುಟದ ತೀರ್ಮಾನದಂತೆ, ರಾಷ್ಟ್ರಪತಿ, ಉಪರಾಷ್ಟ್ರಪತಿ, ಪ್ರಧಾನಮಂತ್ರಿ ಹಾಗೂ ರಾಜ್ಯಪಾಲರು ಉಪಸ್ಥಿತರಿರುವ ಕಾರ್ಯಕ್ರಮಗಳನ್ನು ಹೊರತುಪಡಿಸಿ, ರಾಜ್ಯ ಸರ್ಕಾರದ ಉಳಿದ ಎಲ್ಲಾ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲು ಸೂಚಿಸಲಾಗಿದೆ.

ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಅಧೀನ ಕಾರ್ಯದರ್ಶಿ ಸಂದೀಪ್ ಬಿ.ಕೆ. ಅವರು ಹೊರಡಿಸಿರುವ ಆದೇಶದಲ್ಲಿ ಈ ಸೂಚನೆ ನೀಡಲಾಗಿದೆ.

ಈ ಮೂಲಕ ರಾಜ್ಯ ಸರ್ಕಾರಿ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗಾಯನಕ್ಕೆ ಸಂಬಂಧಿಸಿದಂತೆ ನಿರ್ದಿಷ್ಟ ಶಿಷ್ಟಾಚಾರವನ್ನು ಜಾರಿಗೆ ತರಲು ಸರ್ಕಾರ ಮುಂದಾಗಿದೆ.

ಮಕ್ಕಳ ನಾಪತ್ತೆ, ಅಪಹರಣ ಪ್ರಕರಣಗಳ ತನಿಖೆಗೆ ದೇಶಾದ್ಯಂತ ಏಕರೂಪ ವ್ಯವಸ್ಥೆ?: ಕೇಂದ್ರ, ರಾಜ್ಯಗಳಿಗೆ ಸುಪ್ರೀಂ ನೋಟಿಸ್

0

ನವದೆಹಲಿ: ಮಕ್ಕಳ ನಾಪತ್ತೆ, ಅಪಹರಣ ಹಾಗೂ ಬಲವಂತವಾಗಿ ಕರೆದೊಯ್ಯುವ ಪ್ರಕರಣಗಳ ತನಿಖೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ವಿಚಾರಣೆ ನಡೆಸಿದೆ. ಈ ಸಂಬಂಧ ಕೇಂದ್ರ ಸರ್ಕಾರ, ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಸೇರಿದಂತೆ ಹಲವು ಸಂಬಂಧಿತ ಸಂಸ್ಥೆಗಳಿಗೆ ನ್ಯಾಯಾಲಯ ನೋಟಿಸ್ ಜಾರಿ ಮಾಡಿದೆ.

ಮಕ್ಕಳ ನಾಪತ್ತೆ ಮತ್ತು ಅಪಹರಣ ಪ್ರಕರಣಗಳ ತನಿಖೆಗೆ ದೇಶಾದ್ಯಂತ ಏಕರೂಪ ವ್ಯವಸ್ಥೆ ರೂಪಿಸಬೇಕು, ತನಿಖೆಯನ್ನು ನಿಗದಿತ ಕಾಲಮಿತಿಯಲ್ಲಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕು ಹಾಗೂ ಇಂತಹ ಪ್ರಕರಣಗಳಿಗೆ ವಿಶೇಷ ತನಿಖಾ ಪ್ರಕ್ರಿಯೆ ಜಾರಿಗೆ ತರಬೇಕು ಎಂದು ಕೋರಿ ವಕೀಲ ಅಶ್ವಿನಿ ಉಪಾಧ್ಯಾಯ ಸೇರಿದಂತೆ ಹಲವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಸಿದ್ದರು.

ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠ ಈ ಅರ್ಜಿಯ ವಿಚಾರಣೆ ನಡೆಸಿದ್ದು, ಕೇಂದ್ರ ಸರ್ಕಾರದ ಜೊತೆಗೆ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನೋಟಿಸ್ ನೀಡಿದೆ.

ಇದೇ ವೇಳೆ ಶಿಕ್ಷಣ ಸಚಿವಾಲಯ, ಕಾನೂನು ಮತ್ತು ನ್ಯಾಯ ಸಚಿವಾಲಯ, ಗೃಹ ಸಚಿವಾಲಯ ಹಾಗೂ ಕಾನೂನು ಆಯೋಗಕ್ಕೂ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಮಕ್ಕಳ ಅಪಹರಣ ಮತ್ತು ಬಲವಂತವಾಗಿ ಕರೆದೊಯ್ಯುವ ಪ್ರಕರಣಗಳ ತನಿಖೆಗೆ ದೇಶಾದ್ಯಂತ ಒಂದೇ ರೀತಿಯ ವ್ಯವಸ್ಥೆ ರೂಪಿಸುವ ಅಗತ್ಯವಿದೆ ಎಂದು ಅರ್ಜಿಯಲ್ಲಿ ಒತ್ತಾಯಿಸಲಾಗಿದೆ. ತನಿಖೆಯನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವ ವ್ಯವಸ್ಥೆ ಜಾರಿಗೆ ತರಬೇಕು ಹಾಗೂ ಇಂತಹ ಪ್ರಕರಣಗಳಿಗೆ ಪ್ರತ್ಯೇಕ ಮತ್ತು ವಿಶೇಷ ತನಿಖಾ ಪ್ರಕ್ರಿಯೆ ರೂಪಿಸಬೇಕು ಎಂದು ಮನವಿ ಮಾಡಲಾಗಿದೆ.

ಅಲ್ಲದೆ, ಮಕ್ಕಳ ನಾಪತ್ತೆ ಮತ್ತು ಅಪಹರಣಕ್ಕೆ ಸಂಬಂಧಿಸಿದ ಪ್ರಕರಣಗಳ ವಿಚಾರಣೆಯನ್ನು ತ್ವರಿತವಾಗಿ ಪೂರ್ಣಗೊಳಿಸಲು ವಿಶೇಷ ನ್ಯಾಯಾಲಯಗಳ ವ್ಯವಸ್ಥೆ ಕಲ್ಪಿಸಬೇಕು ಎಂಬ ಬೇಡಿಕೆಯನ್ನೂ ಅರ್ಜಿಯಲ್ಲಿ ಮುಂದಿಡಲಾಗಿದೆ.

ಈ ಪ್ರಕರಣದಲ್ಲಿ ಕೇಂದ್ರ ಸರ್ಕಾರ, ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು ಹಾಗೂ ಸಂಬಂಧಿತ ಸಚಿವಾಲಯಗಳು ಮತ್ತು ಕಾನೂನು ಆಯೋಗದಿಂದ ಪ್ರತಿಕ್ರಿಯೆ ಪಡೆಯಲು ಸುಪ್ರೀಂ ಕೋರ್ಟ್ ಮುಂದಾಗಿದ್ದು, ಮಕ್ಕಳ ನಾಪತ್ತೆ ಮತ್ತು ಅಪಹರಣ ಪ್ರಕರಣಗಳ ತನಿಖಾ ವ್ಯವಸ್ಥೆಯಲ್ಲಿ ಏಕರೂಪತೆ ಹಾಗೂ ವೇಗ ತರಲು ಮುಂದಿನ ವಿಚಾರಣೆ ಮಹತ್ವ ಪಡೆದುಕೊಂಡಿದೆ.

ಗ್ಯಾರಂಟಿ ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲ: 100 ದಿನಗಳ ಆಡಳಿತದ ಸಾಧನೆಗಳನ್ನು ವಿವರಿಸಿದ ಡಿ.ಕೆ. ಶಿವಕುಮಾರ್

0

ಬೆಂಗಳೂರು: ಕರ್ನಾಟಕದ ಗ್ಯಾರಂಟಿ ಯೋಜನೆಗಳನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ ವಿಪಕ್ಷಗಳು ಟೀಕಿಸಿದ್ದವು. ಆದರೆ ಇದೀಗ ಇದೇ ಗ್ಯಾರಂಟಿ ಮಾಡೆಲ್‌ ದೇಶದ ವಿವಿಧೆಡೆ ಜಾರಿಯಾಗಿದ್ದು, ವಿಶ್ವದ ಹಲವು ದೇಶಗಳು ಕೂಡ ಇದನ್ನು ಒಪ್ಪಿಕೊಂಡಿವೆ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ರಾಜ್ಯ ಸರ್ಕಾರದ 100 ದಿನಗಳ ಆಡಳಿತದ ಶತದಿನೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್, ಇದು ಕೇವಲ ನೂರು ದಿನಗಳ ಆಚರಣೆಯಲ್ಲ. ಇದು ತಮ್ಮೊಬ್ಬರ ಸರ್ಕಾರವಲ್ಲ, ರಾಜ್ಯದ 7 ಕೋಟಿ ಜನರ ಸರ್ಕಾರ ಎಂದು ಹೇಳಿದರು.

‘ನಾನೊಬ್ಬನೇ ರಥ ಎಳೆಯುತ್ತಿಲ್ಲ’ ಎಂದು ಹೇಳಿದ ಅವರು, ಸರ್ಕಾರ ಹಲವು ಆಲೋಚನೆಗಳೊಂದಿಗೆ ರಾಜ್ಯದ ಅಭಿವೃದ್ಧಿಯತ್ತ ಸಾಗುತ್ತಿದೆ. ನಾಡಿನ ಜನರ ಶ್ರಮ ಹಾಗೂ ಯುವಕರ ಕನಸುಗಳೇ ಕರ್ನಾಟಕದ ಪ್ರಗತಿಗೆ ಆಧಾರ ಎಂದು ಹೇಳಿದರು.

ಎಲ್ಲಾ ಸಚಿವರು, 224 ಶಾಸಕರು, 75 ವಿಧಾನ ಪರಿಷತ್ ಸದಸ್ಯರು, 12 ರಾಜ್ಯಸಭಾ ಸದಸ್ಯರು ಹಾಗೂ 28 ಲೋಕಸಭಾ ಸದಸ್ಯರು ಒಟ್ಟಾಗಿ ರಾಜ್ಯದ ಹಿತಕ್ಕಾಗಿ ಕೆಲಸ ಮಾಡುತ್ತಿದ್ದಾರೆ. ಯಾರು ಸಹಕಾರ ನೀಡುತ್ತಾರೆ ಎಂಬುದು ಮುಖ್ಯವಲ್ಲ. ಎಲ್ಲರೂ ಒಟ್ಟಾಗಿ ನಾಡಿನ ಹಾಗೂ ದೇಶದ ಹಿತಕ್ಕಾಗಿ ಸಂವಿಧಾನಬದ್ಧವಾಗಿ ಕೆಲಸ ಮಾಡುತ್ತೇವೆ. ಯಾವುದೇ ರಾಗ-ದ್ವೇಷವಿಲ್ಲದೆ ಎಲ್ಲರನ್ನೂ ಸಮಾನವಾಗಿ ನೋಡುತ್ತೇವೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು.

ಗ್ಯಾರಂಟಿ ಯೋಜನೆಗಳಿಗೆ ₹1.45 ಲಕ್ಷ ಕೋಟಿ ಖರ್ಚು

ಜನರ ಜೀವನಕ್ಕೆ ನೆರವಾಗುವ ಗ್ಯಾರಂಟಿ ಯೋಜನೆಗಳಿಗಾಗಿ ಇದುವರೆಗೆ ₹1,45,416 ಕೋಟಿ ಹಣ ನೀಡಲಾಗಿದೆ ಎಂದು ಡಿಕೆಶಿ ವಿವರಿಸಿದರು. ಇದು ಜಗತ್ತಿನ ಅತಿ ದೊಡ್ಡ ಯೋಜನೆಗಳಲ್ಲೊಂದು ಎಂದು ಬಣ್ಣಿಸಿದ ಅವರು, ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲು ಸಾಧ್ಯವಿಲ್ಲ ಎಂದು ಹಲವರು ಹೇಳಿದ್ದರು. ಆದರೆ ಕಾಂಗ್ರೆಸ್ ಸರ್ಕಾರ ಅದನ್ನು ಸಾಧಿಸಿ ತೋರಿಸಿದೆ ಎಂದರು.

ಗೃಹಲಕ್ಷ್ಮಿ ಯೋಜನೆಯಡಿ 1.24 ಕೋಟಿ ಮಹಿಳೆಯರಿಗೆ ಹಣ ತಲುಪಿದ್ದು, ಪ್ರತಿ ಮಹಿಳೆಗೆ ₹66 ಸಾವಿರದಷ್ಟು ಹಣ ಸಿಕ್ಕಿದೆ ಎಂದು ಅವರು ಹೇಳಿದರು. ಗೃಹಜ್ಯೋತಿ ಯೋಜನೆಯಡಿ 1.67 ಕೋಟಿ ಜನರಿಗೆ ಸೌಲಭ್ಯ ನೀಡಲಾಗಿದ್ದು, ಇದಕ್ಕಾಗಿ ₹30,522 ಕೋಟಿ ಖರ್ಚು ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಅನ್ನಭಾಗ್ಯ ಯೋಜನೆಯಡಿ 4.44 ಕೋಟಿ ಜನರಿಗೆ ಸೌಲಭ್ಯ ನೀಡಲಾಗಿದ್ದು, ಇದಕ್ಕಾಗಿ ₹21,054 ಕೋಟಿ ಖರ್ಚು ಮಾಡಲಾಗಿದೆ. ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಯಂತೆ ಹಸಿವು ಮುಕ್ತ ರಾಜ್ಯ ನಿರ್ಮಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.

ಶಕ್ತಿ ಯೋಜನೆ, ಯುವನಿಧಿ ಬಗ್ಗೆಯೂ ಮಾಹಿತಿ

ಶಕ್ತಿ ಯೋಜನೆಯಡಿ ಇದುವರೆಗೆ 821 ಕೋಟಿ ಉಚಿತ ಬಸ್ ಪ್ರಯಾಣಗಳು ನಡೆದಿದ್ದು, ₹15,735 ಕೋಟಿ ವೆಚ್ಚವಾಗಿದೆ ಎಂದು ಡಿಕೆಶಿ ತಿಳಿಸಿದರು. ಶಕ್ತಿ ಯೋಜನೆಗೆ ಸಂಬಂಧಿಸಿದಂತೆ ಸ್ಮಾರ್ಟ್ ಕಾರ್ಡ್ ನೀಡುವ ಕುರಿತು ಸಚಿವ ಸಂಪುಟದಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಯುವನಿಧಿ ಯೋಜನೆಯಡಿ 3.72 ಲಕ್ಷ ಯುವಕರಿಗೆ ಸೌಲಭ್ಯ ನೀಡಲಾಗಿದ್ದು, ₹1,154 ಕೋಟಿ ಖರ್ಚು ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

‘ಕಾಂಗ್ರೆಸ್ ಶಕ್ತಿ ದೇಶದ ಶಕ್ತಿ. ಯಾವುದೇ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲು ಸಾಧ್ಯವಿಲ್ಲ’ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ರಾಷ್ಟ್ರಗೀತೆಯಿಂದ ಹಿಡಿದು ಹಲವು ಕ್ಷೇತ್ರಗಳಲ್ಲಿ ಬದಲಾವಣೆ ಹಾಗೂ ಕೆಲಸಗಳನ್ನು ಮಾಡಿದೆ. ಇವುಗಳನ್ನು ಯಾರಿಂದಲೂ ಬದಲಿಸಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.

ರೈತರು, ನೀರಾವರಿ ಯೋಜನೆಗಳಿಗೂ ಒತ್ತು

ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲು ಸಾಧ್ಯವಿಲ್ಲ ಎಂದು ಪ್ರಧಾನಿ ಹಾಗೂ ವಿಪಕ್ಷಗಳು ಹೇಳಿದ್ದವು. ಆದರೆ ಇದೀಗ ಕರ್ನಾಟಕದ ಗ್ಯಾರಂಟಿ ಮಾಡೆಲ್‌ ದೇಶದ ವಿವಿಧೆಡೆ ಕಾಣಿಸುತ್ತಿದ್ದು, ವಿಶ್ವದ ಹಲವು ದೇಶಗಳು ಇದನ್ನು ಒಪ್ಪಿಕೊಂಡಿವೆ ಎಂದು ಡಿಕೆಶಿ ಪುನರುಚ್ಚರಿಸಿದರು.

ರೈತರಿಗೆ ₹25,652 ಕೋಟಿ ಶೂನ್ಯ ಬಡ್ಡಿ ಸಾಲ ನೀಡಲಾಗಿದೆ ಎಂದು ಅವರು ತಿಳಿಸಿದರು. ನೀರಾವರಿ ಯೋಜನೆಗಳಿಗೆ ₹17 ಸಾವಿರ ಕೋಟಿ ನೀಡಲಾಗಿದ್ದು, ಒಟ್ಟು 121 ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ (KKRDB) ₹5 ಸಾವಿರ ಕೋಟಿ ಅನುದಾನ ನೀಡಲಾಗಿದೆ ಎಂದು ಡಿ.ಕೆ. ಶಿವಕುಮಾರ್ ತಮ್ಮ ಸರ್ಕಾರದ ಸಾಧನೆಗಳನ್ನು ವಿವರಿಸಿದರು.

ಕೇಂದ್ರದಿಂದ ಕರ್ನಾಟಕಕ್ಕೆ ₹2,186 ಕೋಟಿ ರೂ. ಬಾಕಿ: ಹಣಕ್ಕಾಗಿ ಕೋರ್ಟ್ ಮೊರೆ ಹೋಗಲು ಈಶ್ವರ ಖಂಡ್ರೆ ನಿರ್ಧಾರ

0

ಬೆಂಗಳೂರು: 15ನೇ ಹಣಕಾಸು ಆಯೋಗದ ಶಿಫಾರಸಿನಂತೆ ರಾಜ್ಯದ ಗ್ರಾಮ ಪಂಚಾಯಿತಿಗಳಿಗೆ ಬರಬೇಕಾದ ₹2,186.20 ಕೋಟಿ ಅನುದಾನವನ್ನು ತಡೆಹಿಡಿದಿರುವ ಕೇಂದ್ರ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ಮೊರೆ ಹೋಗಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಈ ಸಂಬಂಧ ಇಂದು ತಮ್ಮ ಕಚೇರಿಯಲ್ಲಿ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಚಿವ ಈಶ್ವರ ಖಂಡ್ರೆ ಸಭೆ ನಡೆಸಿದರು. 2025-26ನೇ ಸಾಲಿನಲ್ಲಿ ರಾಜ್ಯದ ಗ್ರಾಮ ಪಂಚಾಯಿತಿಗಳಿಗೆ ಹಂಚಿಕೆ ಮಾಡಲಾಗಿದ್ದ ₹2,186.20 ಕೋಟಿ ಅನುದಾನವನ್ನು ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ನಿರಾಕರಿಸಿರುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.

ರಾಜ್ಯಕ್ಕೆ ನ್ಯಾಯಯುತವಾಗಿ ಬರಬೇಕಾದ ಅನುದಾನವನ್ನು ಬಿಡುಗಡೆ ಮಾಡದೇ ಇರುವ ಕೇಂದ್ರದ ಕ್ರಮದ ಬಗ್ಗೆ ಸಚಿವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ವಿಚಾರವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲು ಇರುವ ಕಾನೂನು ಅಂಶಗಳ ಕುರಿತು ಅಡ್ವೊಕೇಟ್ ಜನರಲ್ ಹಾಗೂ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಾಗಿದೆ.

ಇದೇ ವೇಳೆ ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ಎದುರಾಗಿದ್ದು, 710 ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ. 149 ಗ್ರಾಮಗಳಿಗೆ ಟ್ಯಾಂಕರ್‌ಗಳ ಮೂಲಕ ಕುಡಿಯುವ ನೀರು ಪೂರೈಸಲಾಗುತ್ತಿದ್ದು, 561 ಖಾಸಗಿ ಕೊಳವೆಬಾವಿಗಳನ್ನು ಬಾಡಿಗೆಗೆ ಪಡೆಯಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಮಳೆಯ ಕೊರತೆಯಿಂದ ಬಿತ್ತನೆ ಮಾಡಿರುವ ಬೀಜಗಳು ಮೊಳಕೆಯೊಡೆಯದೆ ರೈತರು ಸಂಕಷ್ಟಕ್ಕೆ ಸಿಲುಕಿರುವ ಪರಿಸ್ಥಿತಿಯಲ್ಲೂ ಕೇಂದ್ರ ಸರ್ಕಾರ ಗ್ರಾಮ ಪಂಚಾಯಿತಿಗಳಿಗೆ ಬರಬೇಕಾದ ಅನುದಾನವನ್ನು ಬಿಡುಗಡೆ ಮಾಡದಿರುವುದು ಸರಿಯಲ್ಲ ಎಂದು ಸಚಿವರು ಹೇಳಿದ್ದಾರೆ.