ಬೆಂಗಳೂರು: ಕರ್ನಾಟಕದ ಗ್ರಾಮೀಣ ಭಾಗದ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸುವ ಯೋಜನೆಗಳಲ್ಲಿ ಪಾರದರ್ಶಕತೆ ಹಾಗೂ ನಿಖರತೆ ಹೆಚ್ಚಿಸುವ ನಿಟ್ಟಿನಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಮಹತ್ವದ ಹೆಜ್ಜೆ ಇಟ್ಟಿದೆ.
ಇಲಾಖೆಯ ವ್ಯಾಪ್ತಿಗೆ ಬರುವ ಸಮಗ್ರ ಮೂಲಸೌಕರ್ಯ ಹಾಗೂ ಆಸ್ತಿಗಳ ನಿರ್ವಹಣೆಗಾಗಿ ರೂಪಿಸಿರುವ ‘ಜಲ ಆಸ್ತಿ’ ವೆಬ್ ಅಪ್ಲಿಕೇಶನ್ ಮತ್ತು ಮೊಬೈಲ್ ಆ್ಯಪ್ ಅನ್ನು ಸಚಿವ ಈಶ್ವರ ಖಂಡ್ರೆ ಅವರು ಗುರುವಾರ ಅಧಿಕೃತವಾಗಿ ಲೋಕಾರ್ಪಣೆಗೊಳಿಸಿದರು.
ಆ್ಯಪ್ ಬಿಡುಗಡೆ ಬಳಿಕ ಮಾತನಾಡಿದ ಸಚಿವ ಈಶ್ವರ ಖಂಡ್ರೆ, ಗ್ರಾಮೀಣ ಭಾಗದ ಜನರಿಗೆ ಕುಡಿಯುವ ನೀರಿನ ಕೊರತೆಯಾಗದಂತೆ ‘ಜಲಜೀವನ್ ಮಿಷನ್’ ಸೇರಿದಂತೆ ಸುಮಾರು ₹37 ಸಾವಿರ ಕೋಟಿ ವೆಚ್ಚದ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳು ಪ್ರಗತಿಯಲ್ಲಿವೆ ಎಂದು ತಿಳಿಸಿದರು.
ಈ ಯೋಜನೆಗಳಡಿ ನಿರ್ಮಾಣವಾಗುವ ಆಸ್ತಿಗಳು ದೀರ್ಘಕಾಲ ಜನರಿಗೆ ಸೇವೆ ನೀಡಬೇಕಾದರೆ ಅವುಗಳ ಸಮಗ್ರ ದಾಖಲೀಕರಣ ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಇಲಾಖೆಯ ವ್ಯಾಪ್ತಿಯಲ್ಲಿರುವ ಸುಮಾರು 3 ಲಕ್ಷ ಜಲ ಆಸ್ತಿಗಳನ್ನು ಡಿಜಿಟಲೀಕರಣಗೊಳಿಸಲಾಗುತ್ತಿದೆ. ಈಗಾಗಲೇ ಮೊದಲ ಹಂತದ ಪರಿಶೀಲನೆಯಲ್ಲಿ 70 ಸಾವಿರಕ್ಕೂ ಅಧಿಕ ಜಲ ಸ್ವತ್ತುಗಳ ದಾಖಲೀಕರಣ ಪೂರ್ಣಗೊಂಡಿದೆ ಎಂದು ಹೇಳಿದರು.
ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ:
ಬೋರ್ವೆಲ್ಗಳು, ಪೈಪ್ಲೈನ್ಗಳು, ನೀರಿನ ಟ್ಯಾಂಕ್ಗಳು, ಅವುಗಳ ಪ್ರಸ್ತುತ ಕಾರ್ಯಕ್ಷಮತೆ ಹಾಗೂ ಪ್ರಗತಿಯಲ್ಲಿರುವ ಕಾಮಗಾರಿಗಳ ಹಂತ ಸೇರಿದಂತೆ ಪ್ರತಿಯೊಂದು ಮಾಹಿತಿಯನ್ನೂ ‘ಜಲ ಆಸ್ತಿ’ ತಂತ್ರಾಂಶದಲ್ಲಿ ದಾಖಲಿಸಲಾಗುತ್ತದೆ.
ಸಹಾಯಕ ಎಂಜಿನಿಯರ್ಗಳು ಸ್ಥಳಕ್ಕೆ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಿ ವರದಿಯನ್ನು ಆ್ಯಪ್ನಲ್ಲಿ ಅಪ್ಲೋಡ್ ಮಾಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಈ ವ್ಯವಸ್ಥೆಯ ಮೂಲಕ ಯಾವುದೇ ಲೋಪವಾಗದಂತೆ ನಿಗಾ ವಹಿಸಿ, ಹಳ್ಳಿಗಾಡಿನ ಕಟ್ಟಕಡೆಯ ಮನೆಗೂ ನಿರಂತರ ಕುಡಿಯುವ ನೀರು ಪೂರೈಕೆಯಾಗುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.

