Home Blog

ಬೆಂಗಳೂರು ಗಡಿಯಲ್ಲಿ ರಾಶಿ ರಾಶಿ ಜಿಲೆಟಿನ್ ಕಡ್ಡಿಗಳು ಪತ್ತೆ; ಸಾರ್ವಜನಿಕರಲ್ಲಿ ಭೀತಿ, ಭದ್ರತಾ ಇಲಾಖೆಗಳು ಅಲರ್ಟ್

ಬೆಂಗಳೂರು: ನಗರದ ಹೊರವಲಯದ ಅವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ನಿರ್ಜನ ಪ್ರದೇಶದಲ್ಲಿ ಭಾರಿ ಪ್ರಮಾಣದ ಜಿಲೆಟಿನ್ ಕಡ್ಡಿಗಳು ಹಾಗೂ ವೈಯರ್‌ಗಳು ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ.

ಮಾಹಿತಿ ತಿಳಿಯುತ್ತಿದ್ದಂತೆ ಅವಲಹಳ್ಳಿ ಪೊಲೀಸರು ಹಾಗೂ ವಿಧಿ ವಿಜ್ಞಾನ ಪ್ರಯೋಗಾಲಯದ (ಎಫ್‌ಎಸ್‌ಎಲ್) ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸ್ಫೋಟಕ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ನಿರ್ಜನ ಪ್ರದೇಶದಲ್ಲಿ ಅನುಮಾನಾಸ್ಪದವಾಗಿ ಬಿದ್ದಿದ್ದ ಜಿಲೆಟಿನ್ ಕಡ್ಡಿಗಳು ಮತ್ತು ವೈಯರ್‌ಗಳನ್ನು ಸ್ಥಳೀಯರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ಧಾವಿಸಿದ ಅಧಿಕಾರಿಗಳು ಪ್ರದೇಶವನ್ನು ಭದ್ರತಾ ವಲಯವಾಗಿ ಘೋಷಿಸಿ ಪರಿಶೀಲನೆ ನಡೆಸಿದರು.

ಈ ಘಟನೆ ಕಳೆದ ತಿಂಗಳು ಪ್ರಧಾನಿ ನರೇಂದ್ರ ಮೋದಿ ಅವರ ಬೆಂಗಳೂರು ಭೇಟಿಯ ವೇಳೆ ಪತ್ತೆಯಾಗಿದ್ದ ಜಿಲೆಟಿನ್ ಕಡ್ಡಿಗಳ ಪ್ರಕರಣವನ್ನು ನೆನಪಿಸಿದೆ. ಕನಕಪುರ ರಸ್ತೆಯಲ್ಲಿರುವ ಆರ್ಟ್ ಆಫ್ ಲಿವಿಂಗ್ ಆಶ್ರಮದಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಿ ಆಗಮಿಸಿದ್ದ ಸಂದರ್ಭದಲ್ಲಿ, ಅವರ ಸಂಚಾರ ಮಾರ್ಗದ ಸಮೀಪದ ವಡೇರಹಳ್ಳಿ ಗೇಟ್ ಬಳಿ ಅನುಮಾನಾಸ್ಪದ ಬಾಕ್ಸ್ ಪತ್ತೆಯಾಗಿತ್ತು.

ಅಂದು ಬಾಂಬ್ ನಿಷ್ಕ್ರಿಯ ದಳ ಪರಿಶೀಲನೆ ನಡೆಸಿದಾಗ ಬಾಕ್ಸ್‌ನಲ್ಲಿ ಎರಡು ಜಿಲೆಟಿನ್ ಕಡ್ಡಿಗಳು, ನಾಲ್ಕು ಗಂಧದ ಕಡ್ಡಿಗಳು, ಒಂದು ಬೆಂಕಿಪೊಟ್ಟಣ ಹಾಗೂ ಎರಡು ಬ್ಯಾಟರಿಗಳು ಪತ್ತೆಯಾಗಿದ್ದವು. ಬಳಿಕ ಭದ್ರತಾ ದೃಷ್ಟಿಯಿಂದ ಸಂಪೂರ್ಣ ಮಾರ್ಗವನ್ನು ಮರುಪರಿಶೀಲನೆ ನಡೆಸಿ ಪ್ರಧಾನಿಗಳ ಸಂಚಾರಕ್ಕೆ ಅನುಮತಿ ನೀಡಲಾಗಿತ್ತು.

ಇದೀಗ ಮತ್ತೆ ಅವಲಹಳ್ಳಿ ವ್ಯಾಪ್ತಿಯಲ್ಲಿ ದೊಡ್ಡ ಪ್ರಮಾಣದಲ್ಲಿ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಈ ಸ್ಫೋಟಕ ವಸ್ತುಗಳನ್ನು ಕಲ್ಲು ಕ್ವಾರಿಗಳಲ್ಲಿ ಬಳಸಲು ತರಲಾಗಿರಬಹುದೆಂಬ ಶಂಕೆಯೂ ವ್ಯಕ್ತವಾಗಿದೆ.

ಪ್ರಕರಣ ದಾಖಲಿಸಿಕೊಂಡಿರುವ ಅವಲಹಳ್ಳಿ ಠಾಣೆ ಪೊಲೀಸರು ಜಿಲೆಟಿನ್ ಕಡ್ಡಿಗಳ ಮೂಲ, ಅವುಗಳನ್ನು ಅಲ್ಲಿ ಇರಿಸಿದವರು ಯಾರು ಹಾಗೂ ಅದರ ಉದ್ದೇಶವೇನು ಎಂಬುದರ ಕುರಿತು ತನಿಖೆ ಆರಂಭಿಸಿದ್ದಾರೆ. ಎಫ್‌ಎಸ್‌ಎಲ್ ವರದಿ ಬಂದ ಬಳಿಕ ಹೆಚ್ಚಿನ ಮಾಹಿತಿ ಲಭ್ಯವಾಗುವ ನಿರೀಕ್ಷೆಯಿದೆ.

ದೇವೇಗೌಡರ ಬಗ್ಗೆ ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುತ್ತಿದೆ: ಬಿ.ವೈ. ವಿಜಯೇಂದ್ರ ವಾಗ್ದಾಳಿ

ಬೆಂಗಳೂರು: ದೇವೇಗೌಡರ ಕುರಿತು ಕಾಂಗ್ರೆಸ್ ನಾಯಕರು ವ್ಯಕ್ತಪಡಿಸುತ್ತಿರುವ ಕಾಳಜಿ ಕೇವಲ ರಾಜಕೀಯ ಪ್ರೇರಿತವಾಗಿದ್ದು, ಅದು ಮೊಸಳೆ ಕಣ್ಣೀರಿನಂತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಟೀಕಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಅವರು, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಬಗ್ಗೆ ಕಾಂಗ್ರೆಸ್ ನಾಯಕರು ಮಾಡುತ್ತಿರುವ ಹೇಳಿಕೆಗಳಿಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

“ದೇಶದ ಅತ್ಯುನ್ನತ ಹುದ್ದೆಯಾದ ಪ್ರಧಾನ ಮಂತ್ರಿ ಸ್ಥಾನವನ್ನು ಅಲಂಕರಿಸಿದ್ದ ಹೆಮ್ಮೆಯ ಕನ್ನಡಿಗ ಎಚ್.ಡಿ. ದೇವೇಗೌಡರನ್ನು ಅಧಿಕಾರದಿಂದ ಕೆಳಗಿಳಿಸಿದ ಕುಖ್ಯಾತಿ ಕಾಂಗ್ರೆಸ್ ಪಕ್ಷಕ್ಕಿದೆ. ಆದರೆ ಈಗ ಅದೇ ಕಾಂಗ್ರೆಸ್ ನಾಯಕರು ದೇವೇಗೌಡರ ಬಗ್ಗೆ ಕೃತಕ ಕಾಳಜಿ ತೋರಿಸುತ್ತಿರುವುದು ಹಾಸ್ಯಾಸ್ಪದವಾಗಿದೆ” ಎಂದು ವಿಜಯೇಂದ್ರ ಆರೋಪಿಸಿದ್ದಾರೆ.

ರಾಜಕೀಯ ಜೀವನದುದ್ದಕ್ಕೂ ಕಾಂಗ್ರೆಸ್ ಪಕ್ಷ ದೇವೇಗೌಡರನ್ನು ಕಾಡಿದ್ದು, ಅವರ ಪಕ್ಷವನ್ನು ವಿಭಜಿಸಲು ಪ್ರಯತ್ನಿಸಿದೆ ಎಂದು ದೂರಿದ ಅವರು, ಇಂತಹ ಹಿನ್ನೆಲೆಯಿದ್ದರೂ ಕಾಂಗ್ರೆಸ್ ಇನ್ನೂ ಕೊಳಕು ರಾಜಕಾರಣವನ್ನು ಮುಂದುವರಿಸುತ್ತಿದೆ ಎಂದು ಟೀಕಿಸಿದ್ದಾರೆ.

ಭಾರತೀಯ ಜನತಾ ಪಕ್ಷವು ದೇವೇಗೌಡರನ್ನು ಸದಾ ಗೌರವದಿಂದ ನಡೆಸಿಕೊಂಡಿದೆ ಎಂದು ಹೇಳಿದ ವಿಜಯೇಂದ್ರ, ದೇಶದ ಅಭಿವೃದ್ಧಿ ಮತ್ತು ಸಮಗ್ರತೆಗಾಗಿ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದ ಮೇಲೆ ನಂಬಿಕೆ ಇಟ್ಟುಕೊಂಡು ದೇವೇಗೌಡರು ಜೆಡಿಎಸ್ ಪಕ್ಷವನ್ನು ಎನ್‌ಡಿಎ ಮೈತ್ರಿಕೂಟಕ್ಕೆ ಸೇರಿಸಿದ್ದಾರೆ ಎಂದು ತಿಳಿಸಿದ್ದಾರೆ.

“ದೇವೇಗೌಡರು ಬಿಜೆಪಿ ಹಾಗೂ ಎನ್‌ಡಿಎಗೆ ನೀಡಿರುವ ಬೆಂಬಲವನ್ನು ಸಹಿಸಿಕೊಳ್ಳಲಾಗದೇ ಕಾಂಗ್ರೆಸ್ ನಾಯಕರು ಅವರ ಹೆಸರನ್ನು ಬಳಸಿಕೊಂಡು ರಾಜಕೀಯ ಲಾಭ ಪಡೆಯಲು ಪ್ರಯತ್ನಿಸುತ್ತಿದ್ದಾರೆ. ಇದು ನಾಚಿಕೆಗೇಡಿತನದ ಪರಮಾವಧಿಯಾಗಿದೆ” ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

ಹಾರ್ಮುಜ್ ಜಲಸಂಧಿ ಸಮೀಪ ಅಮೆರಿಕದ ಅಪಾಚೆ ಹೆಲಿಕಾಪ್ಟರ್ ಪತನ!

ವಾಷಿಂಗ್ಟನ್: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಅಮೆರಿಕ ಸೇನೆಗೆ ಸೇರಿದ ಎಎಚ್-64 ಅಪಾಚೆ ಗನ್‌ಶಿಪ್ ಹೆಲಿಕಾಪ್ಟರ್ ಹಾರ್ಮುಜ್ ಜಲಸಂಧಿ ಸಮೀಪ ಪತನಗೊಂಡಿರುವ ಘಟನೆ ವರದಿಯಾಗಿದೆ. ಅದೃಷ್ಟವಶಾತ್ ಹೆಲಿಕಾಪ್ಟರ್‌ನಲ್ಲಿದ್ದ ಇಬ್ಬರು ಸಿಬ್ಬಂದಿಯನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ.

ಘಟನೆ ಕುರಿತು ಪ್ರತಿಕ್ರಿಯಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಹೆಲಿಕಾಪ್ಟರ್‌ನಲ್ಲಿದ್ದ ಇಬ್ಬರು ಸಿಬ್ಬಂದಿ ಸುರಕ್ಷಿತರಾಗಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿಸಿದ್ದಾರೆ.

ಹೆಲಿಕಾಪ್ಟರ್ ಪತನಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಇದು ತಾಂತ್ರಿಕ ದೋಷದಿಂದ ಸಂಭವಿಸಿದ ದುರಂತವೇ ಅಥವಾ ಹೊರಗಿನ ದಾಳಿಯ ಪರಿಣಾಮವೇ ಎಂಬುದರ ಕುರಿತು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ವಿಶೇಷವಾಗಿ ಇರಾನ್ ಮತ್ತು ಇಸ್ರೇಲ್ ನಡುವಿನ ಉದ್ವಿಗ್ನತೆ ಹೆಚ್ಚುತ್ತಿರುವ ಸಮಯದಲ್ಲೇ ಈ ಘಟನೆ ನಡೆದಿರುವುದರಿಂದ ಹಲವು ಪ್ರಶ್ನೆಗಳು ಮೂಡಿವೆ.

ಎಎಚ್-64 ಅಪಾಚೆ ಹೆಲಿಕಾಪ್ಟರ್ ಅಮೆರಿಕ ಸೇನೆಯ ಅತ್ಯಾಧುನಿಕ ಯುದ್ಧ ವಿಮಾನಗಳಲ್ಲಿ ಒಂದಾಗಿದ್ದು, ಹೆಲ್ಫೈರ್ ಕ್ಷಿಪಣಿಗಳು ಸೇರಿದಂತೆ ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಹೊತ್ತೊಯ್ಯುವ ಸಾಮರ್ಥ್ಯ ಹೊಂದಿದೆ. ವಿವಿಧ ಸೇನಾ ಕಾರ್ಯಾಚರಣೆಗಳಲ್ಲಿ ಅಪಾಚೆ ಹೆಲಿಕಾಪ್ಟರ್‌ಗಳು ಪ್ರಮುಖ ಪಾತ್ರ ವಹಿಸುತ್ತಿದ್ದು, ವಿಶ್ವದ ಅತ್ಯಂತ ಪರಿಣಾಮಕಾರಿ ದಾಳಿ ಹೆಲಿಕಾಪ್ಟರ್‌ಗಳಲ್ಲಿ ಒಂದಾಗಿ ಪರಿಗಣಿಸಲಾಗುತ್ತದೆ.

ಹಾರ್ಮುಜ್ ಜಲಸಂಧಿ ಪ್ರದೇಶವು ಜಾಗತಿಕ ಇಂಧನ ಸಾಗಣೆಯ ದೃಷ್ಟಿಯಿಂದ ಅತ್ಯಂತ ಮಹತ್ವದ್ದಾಗಿದ್ದು, ಈ ಪ್ರದೇಶದಲ್ಲಿ ಅಮೆರಿಕ ತನ್ನ ಭದ್ರತಾ ಕಾರ್ಯಾಚರಣೆಗಳನ್ನು ಬಲಪಡಿಸಿದೆ. ಇರಾನ್ ವಿರುದ್ಧದ ಕಾರ್ಯಾಚರಣೆಗಳಲ್ಲಿಯೂ ಅಪಾಚೆ ಹೆಲಿಕಾಪ್ಟರ್‌ಗಳನ್ನು ವ್ಯಾಪಕವಾಗಿ ಬಳಸಲಾಗುತ್ತಿದೆ.

ಪ್ರಸ್ತುತ ಘಟನೆ ಕುರಿತು ಅಮೆರಿಕ ಸೇನೆ ಮತ್ತು ಸಂಬಂಧಿತ ಭದ್ರತಾ ಸಂಸ್ಥೆಗಳು ತನಿಖೆ ನಡೆಸುತ್ತಿದ್ದು, ಪತನದ ನಿಜವಾದ ಕಾರಣ ಬಹಿರಂಗವಾಗುವವರೆಗೆ ಊಹಾಪೋಹಗಳಿಗೆ ಅವಕಾಶ ನೀಡದಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಬಂಡೀಪುರ ಅರಣ್ಯದಲ್ಲಿ ಎಣ್ಣೆ ಪಾರ್ಟಿ: ಮದ್ದೂರು ವಲಯದ ಆರ್‌ಎಫ್‌ಒ ಪುನೀತ್ ಕುಮಾರ್ ಅಮಾನತು

ಚಾಮರಾಜನಗರ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದೊಳಗೆ ನಡೆದ ಅಕ್ರಮ ಮದ್ಯಪಾನ ಪಾರ್ಟಿ ಪ್ರಕರಣದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಕಠಿಣ ಕ್ರಮ ಕೈಗೊಂಡಿದೆ. ಕರ್ತವ್ಯ ಲೋಪ ಮತ್ತು ಪ್ರಕರಣವನ್ನು ಮೇಲಧಿಕಾರಿಗಳಿಂದ ಮುಚ್ಚಿಟ್ಟಿರುವ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಮದ್ದೂರು ವನ್ಯಜೀವಿ ವಲಯದ ಆರ್‌ಎಫ್‌ಒ ಡಿ. ಪುನೀತ್ ಕುಮಾರ್ ಅವರನ್ನು ತಕ್ಷಣದಿಂದ ಅಮಾನತುಗೊಳಿಸಲಾಗಿದೆ.

ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಅರಣ್ಯದ ‘ಹುಲಿ ಕಟ್ಟೆ’ ಪ್ರದೇಶದಲ್ಲಿರುವ ಕಳ್ಳಬೇಟೆ ತಡೆ ಶಿಬಿರದ ಎದುರಲ್ಲೇ ರೌಡಿಶೀಟರ್ ಸತೀಶ್ ಅಲಿಯಾಸ್ ಮಹದೇವಪ್ರಸಾದ್ ಹಾಗೂ ಆತನ ಸಹಚರರು ಗಂಗಾಧರ್ ಮತ್ತು ಚೇತನ್ ಮದ್ಯಪಾನ ಪಾರ್ಟಿ ನಡೆಸಿದ್ದಾರೆ. ಶಿಬಿರದ ಸೌರ ಫಲಕವನ್ನು ಮೇಜಾಗಿ ಬಳಸಿಕೊಂಡು ಮದ್ಯದ ಬಾಟಲಿ, ಲೋಟ ಮತ್ತು ಆಹಾರ ಸಾಮಗ್ರಿಗಳೊಂದಿಗೆ ಮೋಜು ಮಾಡಿರುವುದು ಫೋಟೋಗಳಲ್ಲಿ ಸ್ಪಷ್ಟವಾಗಿದೆ. ಈ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದವು.

ತನಿಖೆಯಲ್ಲಿ ಆರ್‌ಎಫ್‌ಒ ಪುನೀತ್ ಕುಮಾರ್ ಅವರು ಘಟನೆ ಕುರಿತು ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡದೇ ಇರುವುದು ಹಾಗೂ ಆರೋಪಿಗಳ ವಿವರಗಳನ್ನು ದಾಖಲಿಸದೇ ಇರುವುದರಿಂದ ಕರ್ತವ್ಯ ಲೋಪ ಎಸಗಿರುವುದು ದೃಢಪಟ್ಟಿದೆ.

ಅರಣ್ಯ ಇಲಾಖೆ ಈಗ ಮೂವರು ಆರೋಪಿಗಳ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದು, ತಲೆಮರೆಸಿಕೊಂಡಿರುವ ಅವರನ್ನು ಪತ್ತೆ ಹಚ್ಚಲು ಪೊಲೀಸರು ಮತ್ತು ಅರಣ್ಯ ಇಲಾಖೆ ಜಂಟಿಯಾಗಿ ಶೋಧ ಕಾರ್ಯ ಮುಂದುವರೆಸಿದ್ದಾರೆ.

ಮತ್ತೆ ಚೇತರಿಸಿಕೊಂಡ ತುಂಗಭದ್ರಾ ಜಲಾಶಯ: ಮುಂಗಾರು ಆರಂಭದಲ್ಲೇ ಹೆಚ್ಚಿದ ಒಳಹರಿವು

0

ಬಳ್ಳಾರಿ: ಬೇಸಿಗೆಯ ತೀವ್ರತೆಯಿಂದಾಗಿ ನೀರಿನ ಮಟ್ಟ ಕುಸಿದು ಡೆಡ್ ಸ್ಟೋರೇಜ್ ಹಂತ ತಲುಪಿದ್ದ ತುಂಗಭದ್ರಾ ಜಲಾಶಯ ಇದೀಗ ಮುಂಗಾರು ಮಳೆಯ ಕೃಪೆಯಿಂದ ಮತ್ತೆ ಜೀವಂತವಾಗುತ್ತಿದೆ. ಜಲಾನಯನ ಪ್ರದೇಶಗಳಲ್ಲಿ ಸುರಿಯುತ್ತಿರುವ ಉತ್ತಮ ಮಳೆಯ ಪರಿಣಾಮ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದ್ದು, ಕೃಷಿ ಆಧಾರಿತ ಪ್ರದೇಶಗಳಲ್ಲಿ ಆಶಾಭಾವನೆ ಮೂಡಿಸಿದೆ.

ಗರಿಷ್ಠ 101 ಟಿಎಂಸಿ ನೀರು ಸಂಗ್ರಹಿಸುವ ಸಾಮರ್ಥ್ಯ ಹೊಂದಿರುವ ಜಲಾಶಯದಲ್ಲಿ ಸದ್ಯ 10 ಟಿಎಂಸಿ ನೀರು ಲಭ್ಯವಿದೆ. ಮಲೆನಾಡು ಪ್ರದೇಶಗಳಲ್ಲಿ ಮಳೆಯ ಪ್ರಮಾಣ ಇದೇ ರೀತಿ ಮುಂದುವರಿದರೆ ತುಂಗಭದ್ರಾ ಜಲಾಶಯ ಈ ವರ್ಷ ದಾಖಲೆಯ ವೇಗದಲ್ಲಿ ಭರ್ತಿಯಾಗುವ ಸಾಧ್ಯತೆ ಇದೆ.

ಕಳೆದ ವರ್ಷ ಮಳೆ ಕೊರತೆಯಿಂದಾಗಿ ರೈತರು ನೀರಿನ ಅಭಾವ ಎದುರಿಸಿದ್ದರೆ, ಈ ಬಾರಿ ಪರಿಸ್ಥಿತಿ ಸಂಪೂರ್ಣ ಬದಲಾಗುವ ಲಕ್ಷಣಗಳು ಗೋಚರಿಸುತ್ತಿವೆ. ತುಂಗಭದ್ರಾ ನೀರನ್ನು ಅವಲಂಬಿಸಿರುವ ಕಲ್ಯಾಣ ಕರ್ನಾಟಕ ಭಾಗದ ಕೊಪ್ಪಳ, ಬಳ್ಳಾರಿ, ರಾಯಚೂರು, ವಿಜಯನಗರ ಜಿಲ್ಲೆಗಳ ಜೊತೆಗೆ ಆಂಧ್ರಪ್ರದೇಶ ಮತ್ತು ತೆಲಂಗಾಣದ ವ್ಯಾಪಕ ಕೃಷಿ ಪ್ರದೇಶಗಳಿಗೆ ಇದು ಶುಭಸುದ್ದಿಯಾಗಿದೆ.

ಬಿತ್ತನೆ ಹಂಗಾಮಿನ ಆರಂಭದಲ್ಲೇ ಜಲಾಶಯದಲ್ಲಿ ನೀರಿನ ಪ್ರಮಾಣ ಹೆಚ್ಚುತ್ತಿರುವುದು ರೈತರ ಆತ್ಮವಿಶ್ವಾಸ ಹೆಚ್ಚಿಸಿದ್ದು, ಕೃಷಿ ಚಟುವಟಿಕೆಗಳಿಗೆ ಅಗತ್ಯ ನೀರಿನ ಭದ್ರತೆ ಸಿಗುವ ನಿರೀಕ್ಷೆ ಬಲಗೊಂಡಿದೆ.

ಅಮೆರಿಕನ್ ಮಹಿಳೆ ಮೇಲಿನ ಅತ್ಯಾಚಾರ ಆರೋಪ: ತನಿಖಾ ದಾಖಲೆ ಸಲ್ಲಿಸಲು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ಬೆಂಗಳೂರು: ಕೊಡಗಿನ ಹೋಂ ಸ್ಟೇನಲ್ಲಿ ಅಮೆರಿಕದ ಪ್ರವಾಸಿ ಮಹಿಳೆಯ ಮೇಲೆ ಅತ್ಯಾಚಾರ ನಡೆದಿರುವ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ತನಿಖೆಯ ಸಂಪೂರ್ಣ ದಾಖಲೆಗಳನ್ನು ಸಲ್ಲಿಸುವಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ. ವಿದೇಶಿ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪಗಳು ಅತ್ಯಂತ ಗಂಭೀರ ಸ್ವರೂಪದ್ದಾಗಿವೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ಮಾಹಿತಿ ನೀಡದ ಆರೋಪದ ಮೇಲೆ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ಹೋಂ ಸ್ಟೇ ಮಾಲೀಕ ಪೊನ್ನಪ್ಪ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ನಡೆಸಿತು.

ತನಿಖೆ ತಡೆಗೆ ನಿರಾಕರಣೆ

ವಿಚಾರಣೆ ವೇಳೆ ನ್ಯಾಯಾಲಯ, ಪ್ರಕರಣದ ದಾಖಲೆಗಳನ್ನು ಪರಿಶೀಲಿಸದೇ ಅರ್ಜಿದಾರರ ವಿರುದ್ಧದ ತನಿಖೆಗೆ ತಡೆಯಾಜ್ಞೆ ನೀಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿತು. ಅಲ್ಲದೆ, ಇದುವರೆಗೆ ನಡೆದಿರುವ ತನಿಖೆಯ ಸಂಪೂರ್ಣ ದಾಖಲೆಗಳನ್ನು ಜೂನ್ 10ರೊಳಗೆ ನ್ಯಾಯಾಲಯಕ್ಕೆ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತು.

ಅರ್ಜಿದಾರರ ಪರ ವಾದ

ಅರ್ಜಿದಾರರ ಪರ ವಕೀಲರು, ತಮ್ಮ ಕಕ್ಷಿದಾರರು ಯಾವುದೇ ರೀತಿಯ ಅತ್ಯಾಚಾರ ಎಸಗಿಲ್ಲ ಹಾಗೂ ಅವರ ವಿರುದ್ಧದ ಆರೋಪಗಳು ಆಧಾರರಹಿತವಾಗಿವೆ ಎಂದು ವಾದಿಸಿದರು. ಎಫ್‌ಐಆರ್‌ನಲ್ಲಿ ಉಲ್ಲೇಖಿಸದಿದ್ದರೂ ನಂತರದ ಹಂತದಲ್ಲಿ ‘ಸಾಮಾನ್ಯ ಉದ್ದೇಶ’ ಎಂಬ ಅಂಶವನ್ನು ಸೇರಿಸಿ ಬಂಧಿಸಲಾಗಿದೆ ಎಂದು ಅವರು ಆಕ್ಷೇಪಿಸಿದರು.

ಘಟನೆ ನಡೆದ ವೇಳೆ ಅರ್ಜಿದಾರರು ಸ್ಥಳದಲ್ಲೇ ಇರಲಿಲ್ಲ ಎಂಬುದನ್ನು ಸಾಬೀತುಪಡಿಸಲು ಸಿಸಿಟಿವಿ ದೃಶ್ಯಾವಳಿಗಳನ್ನು ನ್ಯಾಯಾಲಯಕ್ಕೆ ಸಲ್ಲಿಸುವುದಾಗಿ ವಕೀಲರು ತಿಳಿಸಿದರು.

ಸರ್ಕಾರದ ಪರ ವಾದ

ಸರ್ಕಾರದ ಪರ ವಕೀಲರು, ಹೋಂ ಸ್ಟೇ ಮಾಲೀಕರು ಸಂತ್ರಸ್ತೆಯನ್ನು ಉದ್ದೇಶಪೂರ್ವಕವಾಗಿ ಹೆಚ್ಚು ದಿನಗಳ ಕಾಲ ಅಲ್ಲೇ ಉಳಿಯುವಂತೆ ಒತ್ತಾಯಿಸಿದ್ದರು ಎಂಬ ಆರೋಪವಿದೆ ಎಂದು ನ್ಯಾಯಾಲಯದ ಗಮನಕ್ಕೆ ತಂದರು. ಅಲ್ಲದೆ, ಹೊರಗಿನವರೊಂದಿಗೆ ಸಂಪರ್ಕ ಸಾಧಿಸಲು ಅವಕಾಶ ನೀಡದಂತೆ ನಿರ್ಬಂಧ ಹೇರಲಾಗಿತ್ತು ಎಂಬ ಆರೋಪಗಳೂ ತನಿಖೆಯಲ್ಲಿವೆ ಎಂದು ವಿವರಿಸಿದರು.

ಪ್ರಕರಣದ ಹಿನ್ನೆಲೆ

ಏಪ್ರಿಲ್ 12ರಂದು ಅಮೆರಿಕದ ಮಹಿಳಾ ಪ್ರವಾಸಿಗೆಯೊಬ್ಬರು ಅರ್ಜಿದಾರರ ಹೋಂ ಸ್ಟೇಗೆ ಬಂದಿದ್ದರು. ಈ ವೇಳೆ ಪಾನೀಯದಲ್ಲಿ ಅಮಲು ಪದಾರ್ಥ ಬೆರೆಸಿ, ಅಲ್ಲಿನ ನೌಕರ ಅತ್ಯಾಚಾರ ಎಸಗಿದ್ದಾನೆ ಎಂಬ ಆರೋಪದಡಿ ಪ್ರಕರಣ ದಾಖಲಾಗಿತ್ತು.

ಘಟನೆ ಕುರಿತು ಪೊಲೀಸರಿಗೆ ಮಾಹಿತಿ ನೀಡದ ಆರೋಪದ ಹಿನ್ನೆಲೆಯಲ್ಲಿ ಏಪ್ರಿಲ್ 19ರಂದು ಹೋಂ ಸ್ಟೇ ಮಾಲೀಕ ಪೊನ್ನಪ್ಪ ಅವರನ್ನು ಪೊಲೀಸರು ಬಂಧಿಸಿದ್ದರು.

ಪರಿಹಾರ ಕೋರಿ ಅರ್ಜಿ

ತಮ್ಮ ವಿರುದ್ಧದ ಎಫ್‌ಐಆರ್ ಮತ್ತು ಬಂಧನ ಕ್ರಮವು ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ವಾದಿಸಿರುವ ಪೊನ್ನಪ್ಪ, ತಮಗೆ 15 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ನಿರ್ದೇಶಿಸಬೇಕು ಎಂದು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಪ್ರಕರಣದ ಮುಂದಿನ ವಿಚಾರಣೆಯಲ್ಲಿ ತನಿಖಾ ದಾಖಲೆಗಳನ್ನು ಪರಿಶೀಲಿಸಿದ ಬಳಿಕ ನ್ಯಾಯಾಲಯ ಮುಂದಿನ ಆದೇಶ ನೀಡುವ ಸಾಧ್ಯತೆ ಇದೆ.

ಮಾಜಿ ಸಿಎಂಗಳ ಮನೆಗೆ ಸಿಎಂ ಡಿಕೆಶಿ ಭೇಟಿ: ಅಭಿವೃದ್ಧಿಗೆ ಸಲಹೆ, ಹೊಸ ರಾಜಕೀಯ ಸಂಸ್ಕೃತಿಗೆ ಚಾಲನೆ

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರ ಸ್ವೀಕಾರದ ಬೆನ್ನಲ್ಲೇ ರಾಜ್ಯದ ಹಿರಿಯ ರಾಜಕೀಯ ನಾಯಕರೊಂದಿಗೆ ಸಮಾಲೋಚನೆ ಆರಂಭಿಸಿದ್ದಾರೆ. ಇದರ ಭಾಗವಾಗಿ ಮಾಜಿ ಮುಖ್ಯಮಂತ್ರಿಗಳಾದ ಎಸ್. ಸದಾನಂದ ಗೌಡ, ಜಗದೀಶ್ ಶೆಟ್ಟರ್ ಹಾಗೂ ಎಂ. ವಿರಪ್ಪ ಮೊಯ್ಲಿ ಅವರ ನಿವಾಸಗಳಿಗೆ ಭೇಟಿ ನೀಡಿ ರಾಜ್ಯದ ಅಭಿವೃದ್ಧಿ ಮತ್ತು ಆಡಳಿತ ಸುಧಾರಣೆ ಕುರಿತು ಚರ್ಚೆ ನಡೆಸಿದರು.

ಭೇಟಿ ಬಳಿಕ ಪ್ರತಿಕ್ರಿಯಿಸಿದ ಮಾಜಿ ಮುಖ್ಯಮಂತ್ರಿ ಎಸ್. ಸದಾನಂದ ಗೌಡ, “ಹಿಂದಿನ ಮುಖ್ಯಮಂತ್ರಿಗಳನ್ನು ಹಾಲಿ ಸಿಎಂ ಭೇಟಿ ಮಾಡುವುದು ಉತ್ತಮ ರಾಜಕೀಯ ಸಂಪ್ರದಾಯ. ಇದರಿಂದ ದ್ವೇಷ ರಾಜಕಾರಣ ಕಡಿಮೆಯಾಗುತ್ತದೆ. ಆದರೆ ಇದನ್ನು ನಾನು ಡಿ.ಕೆ. ಶಿವಕುಮಾರ್ ಅವರಿಗೆ ಬೆಂಬಲ ನೀಡಿದ್ದೇನೆ ಎಂದು ಅರ್ಥೈಸಬಾರದು” ಎಂದು ಸ್ಪಷ್ಟಪಡಿಸಿದರು.

ಸುಮಾರು ಅರ್ಧ ಗಂಟೆ ನಡೆದ ಮಾತುಕತೆಯಲ್ಲಿ ಆಡಳಿತಕ್ಕೆ ಸಂಬಂಧಿಸಿದ ಹಲವು ಸಲಹೆಗಳನ್ನು ನೀಡಿದ್ದಾಗಿ ತಿಳಿಸಿದ ಅವರು, ಮಳೆಗಾಲದ ಹಿನ್ನೆಲೆಯಲ್ಲಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿಗೆ ಆದ್ಯತೆ ನೀಡಬೇಕು, ಸರ್ಕಾರಿ ಸೇವೆಗಳು ಜನರ ಮನೆಬಾಗಿಲಿಗೆ ತಲುಪುವ ವ್ಯವಸ್ಥೆ ಬಲಪಡಿಸಬೇಕು ಹಾಗೂ ಕಂದಾಯ ಇಲಾಖೆಯ ತಾಂತ್ರಿಕ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಬೇಕು ಎಂದು ಸಲಹೆ ನೀಡಿದ್ದಾರೆ.

ಇದಲ್ಲದೆ ತಮ್ಮ ಅವಧಿಯಲ್ಲಿ ಜಾರಿಯಾಗಿದ್ದ ‘ಸಕಾಲ’ ಯೋಜನೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಮುಂದುವರಿಸಿದರೆ ಸಾರ್ವಜನಿಕರಿಗೆ ಸಮಯಕ್ಕೆ ಸರಿಯಾಗಿ ಸೇವೆಗಳು ದೊರೆಯುತ್ತವೆ ಎಂದು ಮುಖ್ಯಮಂತ್ರಿ ಗಮನಕ್ಕೆ ತಂದಿರುವುದಾಗಿ ಹೇಳಿದರು.

ಇದೇ ವೇಳೆ ಮಾಜಿ ಮುಖ್ಯಮಂತ್ರಿಗಳಾದ ಜಗದೀಶ್ ಶೆಟ್ಟರ್ ಹಾಗೂ ವಿರಪ್ಪ ಮೊಯ್ಲಿ ಅವರ ನಿವಾಸಗಳಿಗೂ ಭೇಟಿ ನೀಡಿದ ಡಿ.ಕೆ. ಶಿವಕುಮಾರ್, ರಾಜ್ಯದ ಅಭಿವೃದ್ಧಿ ಯೋಜನೆಗಳು, ಆಡಳಿತದ ಆದ್ಯತೆಗಳು ಹಾಗೂ ಭವಿಷ್ಯದ ಕಾರ್ಯತಂತ್ರಗಳ ಕುರಿತು ಚರ್ಚೆ ನಡೆಸಿದರು. ಇದಕ್ಕೂ ಮೊದಲು ಪ್ರಮಾಣವಚನ ಸ್ವೀಕಾರಕ್ಕೂ ಮುನ್ನ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು.

ಲೋಕ ಕಲ್ಯಾಣಕ್ಕಾಗಿ ಲಲಿತಾ ಪರಮೇಶ್ವರಿಗೆ ಹರಿದ್ರಾ ಅರ್ಚನೆ: ಭಕ್ತರ ಮಹಾಸಾಗರ

0

ಮೈಸೂರು: ಅಧಿಕ ಮಾಸದ ಅಂಗವಾಗಿ ಸ್ವರ್ಣ ನೃಸಿಂಹ ದತ್ತ ಸಾಯಿ ಪೀಠಿಕಾ ಸೇವಾ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಲಲಿತಾ ಪರಮೇಶ್ವರಿ ಅಮ್ಮನವರ ಹರಿದ್ರಾ ಅರ್ಚನೆ ಹಾಗೂ ರುದ್ರಾಭಿಷೇಕ ಕಾರ್ಯಕ್ರಮ ಭಕ್ತಿಭಾವದಿಂದ ನೆರವೇರಿತು. ಪರಮಪೂಜ್ಯ ಶ್ರೀ ವೆಂಕಟಾಚಲ ಅವಧೂತ ಗುರುಮಹಾರಾಜರ ಆಶೀರ್ವಾದದೊಂದಿಗೆ ಶ್ರೀ ಅರ್ಜುನ ಅವಧೂತರು ವಿಶೇಷ ಪೂಜಾ ಕೈಂಕರ್ಯ ನಡೆಸಿದರು.

ಲೋಕಕಲ್ಯಾಣ, ಉತ್ತಮ ಮಳೆ-ಬೆಳೆ ಹಾಗೂ ವಿಶ್ವಶಾಂತಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಸಾವಿರಾರು ಭಕ್ತರು ಗುರುಗಳ ದರ್ಶನ ಪಡೆದು ಆಶೀರ್ವಾದ ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪ್ರತಿಯೊಬ್ಬರಿಗೂ ಸಾಲಿಗ್ರಾಮ, ಮಂತ್ರಾಕ್ಷತೆ, ದೇವಿಗೆ ಅರ್ಚನೆ ಮಾಡಿದ ಅರಿಶಿನ ಹಾಗೂ ತಿರುಪತಿ ಲಾಡು ಪ್ರಸಾದ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಭಾರತ ಅಂಡರ್-19 ಕ್ರಿಕೆಟ್ ತಂಡದ ನಾಯಕ ಆಯುಷ್ ಮಾತ್ರೆ ಭಾಗವಹಿಸಿ ಅರ್ಜುನ ಗುರೂಜಿಯ ಆಶೀರ್ವಾದ ಪಡೆದರು. ಕನ್ನಡ ಚಿತ್ರರಂಗ, ಕಿರುತೆರೆ ಕ್ಷೇತ್ರದ ಕಲಾವಿದರು ಹಾಗೂ ಸಮಾಜದ ವಿವಿಧ ಕ್ಷೇತ್ರಗಳ ಗಣ್ಯರು ಸಹ ಉಪಸ್ಥಿತರಿದ್ದರು.

ಅಧಿಕ ಮಾಸವು ಪೂಜೆ, ಜಪ, ತಪ, ದಾನ-ಧರ್ಮಗಳಿಗೆ ಅತ್ಯಂತ ಪವಿತ್ರವಾದ ಮಾಸವಾಗಿದ್ದು, ಪ್ರತಿ 33 ತಿಂಗಳಿಗೊಮ್ಮೆ ಬರುತ್ತದೆ. ಪರಮಪೂಜ್ಯ ಶ್ರೀ ವೆಂಕಟಾಚಲ ಅವಧೂತರು ಅಧಿಕ ಜೇಷ್ಠ ಮಾಸದಲ್ಲಿ ಜನಿಸಿದ್ದು ಈ ಆಚರಣೆಗೆ ಮತ್ತಷ್ಟು ವಿಶೇಷತೆ ತಂದಿದೆ ಎಂದು ಭಕ್ತರು ಅಭಿಪ್ರಾಯಪಟ್ಟರು.

ಸೂರಜ್ ಹೆಗ್ಡೆ ನಿಧನಕ್ಕೆ ರಾಹುಲ್ ಗಾಂಧಿ ಅಂತಿಮ ನಮನ: ಡಾಲರ್ಸ್ ಕಾಲೋನಿ ನಿವಾಸಕ್ಕೆ ಭೇಟಿ

ಬೆಂಗಳೂರು: ಎಐಸಿಸಿ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾಗಿದ್ದ ಸೂರಜ್ ಹೆಗ್ಡೆ ಅವರ ನಿಧನಕ್ಕೆ ಕಾಂಗ್ರೆಸ್ ನಾಯಕರು ಸಂತಾಪ ಸೂಚಿಸಿದ್ದು, ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಇಂದು ಬೆಂಗಳೂರಿನಲ್ಲಿ ಅಂತಿಮ ನಮನ ಸಲ್ಲಿಸಿದರು.

ದೆಹಲಿ ಪ್ರವಾಸದಿಂದ ಬೆಂಗಳೂರಿಗೆ ಆಗಮಿಸಿದ ರಾಹುಲ್ ಗಾಂಧಿ, ನಗರದ ಡಾಲರ್ಸ್ ಕಾಲೋನಿಯಲ್ಲಿರುವ ಸೂರಜ್ ಹೆಗ್ಡೆ ಅವರ ನಿವಾಸಕ್ಕೆ ಭೇಟಿ ನೀಡಿ ಅಂತಿಮ ದರ್ಶನ ಪಡೆದರು. ಈ ವೇಳೆ ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಉಪಸ್ಥಿತರಿದ್ದರು.

ಸೂರಜ್ ಹೆಗ್ಡೆ ಅವರು ಜೂನ್ 7ರಂದು ಹೃದಯಾಘಾತಕ್ಕೆ ಒಳಗಾಗಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಮುಂದುವರಿದರೂ ಫಲಕಾರಿಯಾಗದೆ ಅವರು ನಿಧನರಾಗಿದ್ದರು. ಅವರ ಅಗಲಿಕೆ ಕಾಂಗ್ರೆಸ್ ಪಕ್ಷದಲ್ಲಿ ಶೋಕದ ವಾತಾವರಣ ಸೃಷ್ಟಿಸಿದೆ.

ಸೂರಜ್ ಹೆಗ್ಡೆ ಅವರು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಮೊಮ್ಮಗರಾಗಿದ್ದರು. ಕಾಂಗ್ರೆಸ್ ಪಕ್ಷದಲ್ಲಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದ್ದ ಅವರು ಎಐಸಿಸಿ ಕಾರ್ಯದರ್ಶಿ, ಕೆಪಿಸಿಸಿ ಉಪಾಧ್ಯಕ್ಷ ಹಾಗೂ ತಮಿಳುನಾಡು ಮತ್ತು ಪುದುಚೇರಿ ಕಾಂಗ್ರೆಸ್ ಉಸ್ತುವಾರಿಯಾಗಿ ಸೇವೆ ಸಲ್ಲಿಸಿದ್ದರು.

ರಾಜಕೀಯ ಜೀವನದಲ್ಲಿ ಹಿಂದುಳಿದ ವರ್ಗಗಳ ಅಭಿವೃದ್ಧಿ, ಕಾರ್ಮಿಕರ ಹಕ್ಕುಗಳು ಹಾಗೂ ಸಾಮಾಜಿಕ ನ್ಯಾಯದ ಪರವಾಗಿ ನಿರಂತರವಾಗಿ ಕೆಲಸ ಮಾಡಿದ್ದ ಸೂರಜ್ ಹೆಗ್ಡೆ, ಪಕ್ಷದ ಸಂಘಟನಾತ್ಮಕ ಬಲವರ್ಧನೆಗೂ ಮಹತ್ವದ ಕೊಡುಗೆ ನೀಡಿದ್ದರು.

ಅರ್ಜುನ ಗುರೂಜಿ ದರ್ಶನ ಪಡೆದ ಅಂಡರ್-19 ತಂಡದ ನಾಯಕ ಆಯುಷ್ ಮಾತ್ರೆ

0

ಮೈಸೂರು: ಭಾರತೀಯ ಅಂಡರ್-19 ಕ್ರಿಕೆಟ್ ತಂಡದ ನಾಯಕ ಆಯುಷ್ ಮಾತ್ರೆ ಅವರು ಮೈಸೂರಿಗೆ ಭೇಟಿ ನೀಡಿ ಅವಧೂತ ಶ್ರೀ ಅರ್ಜುನ ಗುರೂಜಿ ಅವರ ಆಶೀರ್ವಾದ ಪಡೆದಿದ್ದಾರೆ. ಕುಟುಂಬ ಹಾಗೂ ಸ್ನೇಹಿತರೊಂದಿಗೆ ಗುರು ನಿವಾಸಕ್ಕೆ ಆಗಮಿಸಿದ ಅವರು, ಗುರೂಜಿಗಳೊಂದಿಗೆ ಸಮಯ ಕಳೆಯುವ ಮೂಲಕ ಆಶೀರ್ವಾದ ಸ್ವೀಕರಿಸಿದರು.

ಇದರ ಬೆನ್ನಲ್ಲೇ ಸ್ವರ್ಣ ನೃಸಿಂಹ ದತ್ತ ಸಾಯಿ ಪೀಠಿಕಾ ಸೇವಾ ಟ್ರಸ್ಟ್ ವತಿಯಿಂದ ನಡೆದ ಲಲಿತಾ ಪರಮೇಶ್ವರಿ ಅಮ್ಮನವರ ಹರಿದ್ರಾ ಅರ್ಚನೆ ಕಾರ್ಯಕ್ರಮದಲ್ಲೂ ಭಾಗವಹಿಸಿದ ಆಯುಷ್ ಮಾತ್ರೆ, ವಿಶೇಷ ಪೂಜೆ ಸಲ್ಲಿಸಿ ದೇವಿಯ ಕೃಪೆಗೆ ಪಾತ್ರರಾದರು.

ಕ್ರಿಕೆಟ್ ವಲಯದಲ್ಲಿ ಈಗಾಗಲೇ ತನ್ನದೇ ಛಾಪು ಮೂಡಿಸಿರುವ ಆಯುಷ್ ಮಾತ್ರೆ, ಏಷ್ಯಾಕಪ್ ಹಾಗೂ ದೇಶೀಯ ಟೂರ್ನಿಗಳಲ್ಲಿ ಗಮನಾರ್ಹ ಪ್ರದರ್ಶನ ನೀಡಿದ್ದಾರೆ. ಇರಾನಿ ಕಪ್‌ನಲ್ಲಿ ಸಿಡಿಸಿದ 176 ರನ್‌ಗಳ ಅದ್ಭುತ ಇನ್ನಿಂಗ್ಸ್ ಅವರ ಪ್ರತಿಭೆಗೆ ಸಾಕ್ಷಿಯಾಗಿದೆ.

ಐಪಿಎಲ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪರ ಅವಕಾಶ ಪಡೆದಿದ್ದ ಯುವ ಬ್ಯಾಟರ್, ತನ್ನ ಆಕ್ರಮಣಕಾರಿ ಆಟದ ಮೂಲಕ ಎಲ್ಲರ ಮೆಚ್ಚುಗೆ ಗಳಿಸಿದ್ದಾರೆ. ಕ್ರೀಡಾ ಸಾಧನೆಗಳ ನಡುವೆಯೂ ಆಧ್ಯಾತ್ಮಿಕ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಆಯುಷ್ ಮಾತ್ರೆ ಅವರ ಭೇಟಿ ಇದೀಗ ಚರ್ಚೆಗೆ ಗ್ರಾಸವಾಗಿದೆ.

error: Content is protected !!