Home Blog

ನೀಟ್ ಹೋರಾಟ ನಿರ್ಣಾಯಕ ಹಂತಕ್ಕೆ: ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬಗ್ಗೆ ಇಂದು ಕೇಂದ್ರದ ಅಂತಿಮ ತೀರ್ಮಾನ?

0

ನವದೆಹಲಿ: ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ವಿರುದ್ಧ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳು ನಿರ್ಣಾಯಕ ಹಂತ ತಲುಪಿದ್ದು, ಕೇಂದ್ರ ಸರ್ಕಾರ ಇಂದು ಮಹತ್ವದ ನಿರ್ಧಾರ ಪ್ರಕಟಿಸುವ ನಿರೀಕ್ಷೆಯಿದೆ. ವಿಶೇಷವಾಗಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಕುರಿತು ಸರ್ಕಾರ ಯಾವ ನಿಲುವು ತೆಗೆದುಕೊಳ್ಳಲಿದೆ ಎಂಬುದರತ್ತ ವಿದ್ಯಾರ್ಥಿಗಳು ಹಾಗೂ ದೇಶದ ಗಮನ ನೆಟ್ಟಿದೆ.

ದೆಹಲಿಯ ಜಂತರ್ ಮಂತರ್‌ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ಆರಂಭವಾದ ವಿದ್ಯಾರ್ಥಿಗಳ ಪ್ರತಿಭಟನೆ ಕಳೆದ ಒಂದು ತಿಂಗಳಿನಿಂದ ಮುಂದುವರಿದಿದ್ದು, ಇದೀಗ ದೇಶದ ಹಲವು ರಾಜ್ಯಗಳಿಗೆ ವಿಸ್ತರಿಸಿದೆ. ನೀಟ್ ಪರೀಕ್ಷಾ ಅಕ್ರಮದ ವಿರುದ್ಧ ಪಾರದರ್ಶಕ ತನಿಖೆ ಮತ್ತು ಹೊಣೆಗಾರಿಕೆ ನಿಗದಿಪಡಿಸುವಂತೆ ವಿದ್ಯಾರ್ಥಿಗಳು ಒತ್ತಾಯಿಸುತ್ತಿದ್ದಾರೆ.

ಮೂರು ಪ್ರಮುಖ ಬೇಡಿಕೆಗಳು

ಸಿಜೆಪಿ ಕೇಂದ್ರ ಸರ್ಕಾರದ ಮುಂದೆ ಮೂರು ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟಿದೆ.

  • ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು.
  • ಆತ್ಮಹತ್ಯೆ ಮಾಡಿಕೊಂಡ ನೀಟ್ ವಿದ್ಯಾರ್ಥಿಗಳ ಕುಟುಂಬಗಳಿಗೆ ತಲಾ ₹1 ಕೋಟಿ ಪರಿಹಾರ ನೀಡಬೇಕು.
  • ಪ್ರತಿಭಟನಾ ನಿರತ ವಿದ್ಯಾರ್ಥಿಗಳ ವಿರುದ್ಧ ದಾಖಲಿಸಿರುವ ಎಫ್‌ಐಆರ್‌ಗಳನ್ನು ಹಿಂಪಡೆಯಬೇಕು.

ದೆಹಲಿಯ ಕಾನ್ಸ್ಟಿಟ್ಯೂಷನ್ ಕ್ಲಬ್‌ನಲ್ಲಿ ಕೇಂದ್ರ ಸಚಿವರಾದ ಜೆ.ಪಿ. ನಡ್ಡಾ ಹಾಗೂ ಜಿತೇಂದ್ರ ಸಿಂಗ್ ಅವರೊಂದಿಗೆ ನಡೆದ ಸಭೆಯಲ್ಲಿ, ವಿದ್ಯಾರ್ಥಿಗಳ ಮೇಲಿನ ಪ್ರಕರಣಗಳನ್ನು ಹಿಂಪಡೆಯುವುದು ಹಾಗೂ ಮೃತ ವಿದ್ಯಾರ್ಥಿಗಳ ಕುಟುಂಬಗಳಿಗೆ ₹1 ಕೋಟಿ ಪರಿಹಾರ ನೀಡುವ ಬೇಡಿಕೆಗಳಿಗೆ ಸರ್ಕಾರ ತಾತ್ವಿಕ ಒಪ್ಪಿಗೆ ಸೂಚಿಸಿದೆ ಎಂದು ಸಿಜೆಪಿ ತಿಳಿಸಿದೆ.

ಆದರೆ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಕುರಿತ ನಿರ್ಧಾರ ಇನ್ನೂ ಬಾಕಿಯಿದ್ದು, ಈ ಬಗ್ಗೆ ಸರ್ಕಾರಕ್ಕೆ 24 ಗಂಟೆಗಳ ಕಾಲಾವಕಾಶ ನೀಡಲಾಗಿತ್ತು. ಆ ಗಡುವು ಇಂದು ಅಂತ್ಯಗೊಳ್ಳಲಿದ್ದು, ಮತ್ತೊಂದು ಸುತ್ತಿನ ಮಾತುಕತೆಯಲ್ಲಿ ಸರ್ಕಾರ ತನ್ನ ಅಂತಿಮ ನಿಲುವು ಪ್ರಕಟಿಸುವ ಸಾಧ್ಯತೆ ಇದೆ.

ಇದರ ನಡುವೆಯೇ ಪರೀಕ್ಷಾ ಅಕ್ರಮಗಳಿಗೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಕಠಿಣ ಕಾನೂನು ತರಲು ಮುಂದಾಗಿದೆ. ಹೊಸ ಪ್ರಸ್ತಾವದ ಪ್ರಕಾರ, ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳನ್ನು ವಿಶೇಷ ಫಾಸ್ಟ್‌ಟ್ರ್ಯಾಕ್ ನ್ಯಾಯಾಲಯಗಳಲ್ಲಿ ವಿಚಾರಣೆ ನಡೆಸಿ ಮೂರು ತಿಂಗಳೊಳಗೆ ತೀರ್ಪು ನೀಡುವ ವ್ಯವಸ್ಥೆ ಜಾರಿಗೆ ಬರಲಿದೆ.

ಜೊತೆಗೆ, ತಪ್ಪಿತಸ್ಥರಿಗೆ ಗರಿಷ್ಠ 10 ವರ್ಷಗಳ ಜೈಲು ಶಿಕ್ಷೆ ಹಾಗೂ ₹10 ಕೋಟಿ ವರೆಗೆ ದಂಡ ವಿಧಿಸುವ ಪ್ರಾವಧಾನವೂ ಹೊಸ ಕಾನೂನಿನಲ್ಲಿ ಇರಲಿದೆ ಎಂದು ಮೂಲಗಳು ತಿಳಿಸಿವೆ. ಈ ಸಂಬಂಧದ ಮಸೂದೆಯನ್ನು ಶೀಘ್ರದಲ್ಲೇ ಸಂಸತ್ತಿನಲ್ಲಿ ಮಂಡಿಸುವ ಸಾಧ್ಯತೆ ಇದೆ.

ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ, “ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೆ ಪ್ರತಿಭಟನೆ ಹಿಂಪಡೆಯುವ ಪ್ರಶ್ನೆಯೇ ಇಲ್ಲ” ಎಂದು ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಹೀಗಾಗಿ ಸರ್ಕಾರದ ಇಂದಿನ ನಿರ್ಧಾರವು ವಿದ್ಯಾರ್ಥಿಗಳ ಹೋರಾಟದ ಮುಂದಿನ ದಿಕ್ಕನ್ನು ನಿರ್ಧರಿಸುವ ಸಾಧ್ಯತೆ ಇದೆ.

ಇನ್ನೊಂದೆಡೆ, ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಯುವಜನರೊಂದಿಗೆ ಹೆಚ್ಚು ಸಂಪರ್ಕದಲ್ಲಿರಲು ಸಚಿವರಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ವಿಶೇಷವಾಗಿ ಇನ್‌ಸ್ಟಾಗ್ರಾಂ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿದ್ದು, ಯುವ ಸಮುದಾಯದ ಅಭಿಪ್ರಾಯಗಳನ್ನು ಆಲಿಸಿ ಅವರೊಂದಿಗೆ ನಿರಂತರ ಸಂಪರ್ಕ ಬೆಳೆಸುವಂತೆ ಸಚಿವರಿಗೆ ಸಲಹೆ ನೀಡಿರುವುದಾಗಿ ಮೂಲಗಳು ತಿಳಿಸಿವೆ.

ಪ್ರತಿದಿನ ನೆಲ್ಲಿಕಾಯಿ ತಿನ್ನುವ ಮುನ್ನ ತಿಳಿಯಿರಿ! ಈ ಆರೋಗ್ಯ ಸಮಸ್ಯೆಗಳಿರುವವರು ಎಚ್ಚರಿಕೆ ವಹಿಸುವುದು ಅಗತ್ಯ

0

ಆಯುರ್ವೇದದಲ್ಲಿ ನೆಲ್ಲಿಕಾಯಿ (ಆಮ್ಲಾ) ಅತ್ಯಂತ ಪೌಷ್ಟಿಕ ಮತ್ತು ಔಷಧೀಯ ಗುಣಗಳನ್ನು ಹೊಂದಿರುವ ಹಣ್ಣೆಂದು ಪರಿಗಣಿಸಲಾಗಿದೆ. ವಿಟಮಿನ್ ಸಿ, ಆಂಟಿಆಕ್ಸಿಡೆಂಟ್‌ಗಳು, ನಾರಿನಾಂಶ ಮತ್ತು ಹಲವು ಅಗತ್ಯ ಪೋಷಕಾಂಶಗಳಿಂದ ಸಮೃದ್ಧವಾಗಿರುವ ನೆಲ್ಲಿಕಾಯಿ, ದೇಹದ ಒಟ್ಟಾರೆ ಆರೋಗ್ಯಕ್ಕೆ ಸಹಕಾರಿಯಾಗಬಹುದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ.

ವಿಶೇಷವಾಗಿ ಬೆಳಿಗ್ಗೆ ಮಿತ ಪ್ರಮಾಣದಲ್ಲಿ ಖಾಲಿ ಹೊಟ್ಟೆಯಲ್ಲಿ ನೆಲ್ಲಿಕಾಯಿಯನ್ನು ಸೇವಿಸುವುದರಿಂದ ಕೆಲವು ಆರೋಗ್ಯ ಪ್ರಯೋಜನಗಳು ದೊರೆಯಬಹುದು. ಆದರೆ ಎಲ್ಲರಿಗೂ ಇದು ಒಂದೇ ರೀತಿಯಲ್ಲಿ ಸೂಕ್ತವಾಗುವುದಿಲ್ಲ. ಹಾಗಾದರೆ ನೆಲ್ಲಿಕಾಯಿ ಸೇವನೆಯ ಪ್ರಮುಖ ಲಾಭಗಳು ಮತ್ತು ಯಾರಿಗೆ ಇದು ಸೂಕ್ತವಲ್ಲ ಎಂಬುದನ್ನು ತಿಳಿದುಕೊಳ್ಳೋಣ.

1. ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಕಾರಿ

ನೆಲ್ಲಿಕಾಯಿಯಲ್ಲಿ ವಿಟಮಿನ್ ಸಿ ಸಮೃದ್ಧವಾಗಿದ್ದು, ಇದು ದೇಹದ ರೋಗನಿರೋಧಕ ಶಕ್ತಿಯನ್ನು ಬಲಪಡಿಸಲು ನೆರವಾಗುತ್ತದೆ. ಇದರಲ್ಲಿರುವ ಆಂಟಿಆಕ್ಸಿಡೆಂಟ್‌ಗಳು ದೇಹವನ್ನು ಆಕ್ಸಿಡೇಟಿವ್ ಒತ್ತಡದಿಂದ ರಕ್ಷಿಸಲು ಸಹಕಾರಿಯಾಗುತ್ತವೆ. ಮಿತ ಪ್ರಮಾಣದಲ್ಲಿ ನೆಲ್ಲಿಕಾಯಿ ಸೇವಿಸುವುದು ಕಾಲೋಚಿತ ಶೀತ, ಕೆಮ್ಮು ಮತ್ತು ಸೋಂಕುಗಳ ವಿರುದ್ಧ ದೇಹದ ಪ್ರತಿರೋಧ ಸಾಮರ್ಥ್ಯವನ್ನು ಹೆಚ್ಚಿಸಲು ನೆರವಾಗಬಹುದು.

2. ಜೀರ್ಣಕ್ರಿಯೆ ಮತ್ತು ಚಯಾಪಚಯ ಕ್ರಿಯೆಗೆ ನೆರವು

ನೆಲ್ಲಿಕಾಯಿಯಲ್ಲಿರುವ ನಾರಿನಾಂಶ ಮತ್ತು ಜೈವಿಕ ಸಂಯುಕ್ತಗಳು ಜೀರ್ಣಕ್ರಿಯೆಯನ್ನು ಸುಧಾರಿಸಲು ಸಹಕಾರಿಯಾಗಬಹುದು. ಇದು ಹೊಟ್ಟೆಯ ಆರೋಗ್ಯ ಕಾಪಾಡಲು, ಮಲಬದ್ಧತೆಯನ್ನು ಕಡಿಮೆ ಮಾಡಲು ಮತ್ತು ಚಯಾಪಚಯ ಕ್ರಿಯೆಯನ್ನು ಚುರುಕುಗೊಳಿಸಲು ನೆರವಾಗಬಹುದು. ಆದರೆ “ದೇಹದಲ್ಲಿನ ವಿಷಕಾರಿ ಅಂಶಗಳನ್ನು ಹೊರಹಾಕುತ್ತದೆ” ಎಂಬ ಹೇಳಿಕೆಗೆ ಸ್ಪಷ್ಟ ವೈಜ್ಞಾನಿಕ ಸಾಕ್ಷ್ಯ ಸೀಮಿತವಾಗಿದೆ.

3. ಚರ್ಮ ಮತ್ತು ಕೂದಲಿನ ಆರೋಗ್ಯಕ್ಕೆ ಸಹಕಾರಿ

ನೆಲ್ಲಿಕಾಯಿಯಲ್ಲಿರುವ ವಿಟಮಿನ್ ಸಿ ಮತ್ತು ಆಂಟಿಆಕ್ಸಿಡೆಂಟ್‌ಗಳು ಕಾಲಜನ್ ಉತ್ಪಾದನೆಗೆ ನೆರವಾಗುವುದರಿಂದ ಚರ್ಮದ ಆರೋಗ್ಯವನ್ನು ಕಾಪಾಡಲು ಸಹಕಾರಿಯಾಗಬಹುದು. ಜೊತೆಗೆ, ಕೂದಲಿನ ಆರೋಗ್ಯಕ್ಕೂ ಪೂರಕವಾಗಿದ್ದು, ಕೂದಲು ಸದೃಢವಾಗಿ ಬೆಳೆಯಲು ನೆರವಾಗಬಹುದು. ಆದರೆ ಅಕಾಲಿಕ ಕೂದಲು ನರೆಸುವಿಕೆಯನ್ನು ಸಂಪೂರ್ಣವಾಗಿ ತಡೆಯುತ್ತದೆ ಎಂಬುದಕ್ಕೆ ಸಾಕಷ್ಟು ವೈಜ್ಞಾನಿಕ ಆಧಾರಗಳಿಲ್ಲ.

ಯಾರು ನೆಲ್ಲಿಕಾಯಿ ಸೇವಿಸುವಾಗ ಎಚ್ಚರಿಕೆ ವಹಿಸಬೇಕು?

ಅಸಿಡಿಟಿ ಅಥವಾ ಹೊಟ್ಟೆ ಉರಿ ಸಮಸ್ಯೆ ಇರುವವರು

ನೆಲ್ಲಿಕಾಯಿ ಸ್ವಾಭಾವಿಕವಾಗಿ ಆಮ್ಲೀಯ ಗುಣವನ್ನು ಹೊಂದಿದೆ. ತೀವ್ರ ಅಸಿಡಿಟಿ ಅಥವಾ ಹೊಟ್ಟೆ ಉರಿ ಸಮಸ್ಯೆ ಇರುವವರು ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ ಕೆಲವರಿಗೆ ಅಸ್ವಸ್ಥತೆ ಉಂಟಾಗಬಹುದು. ಇಂತಹವರು ವೈದ್ಯರ ಸಲಹೆಯಂತೆ ಸೇವಿಸುವುದು ಉತ್ತಮ.

ಶಸ್ತ್ರಚಿಕಿತ್ಸೆಗೆ ಒಳಗಾಗುವವರು

ಕೆಲವು ಅಧ್ಯಯನಗಳ ಪ್ರಕಾರ, ನೆಲ್ಲಿಕಾಯಿಯು ರಕ್ತ ಹೆಪ್ಪುಗಟ್ಟುವಿಕೆಗೆ ಪರಿಣಾಮ ಬೀರುವ ಸಾಧ್ಯತೆ ಇದೆ. ಆದ್ದರಿಂದ ಶಸ್ತ್ರಚಿಕಿತ್ಸೆಗೆ ಒಳಗಾಗುವವರು ಅಥವಾ ರಕ್ತ ತೆಳುವಾಗಿಸುವ ಔಷಧಿಗಳನ್ನು ಸೇವಿಸುವವರು ವೈದ್ಯರ ಸಲಹೆ ಪಡೆಯುವುದು ಸೂಕ್ತ.

ರಕ್ತದಲ್ಲಿನ ಸಕ್ಕರೆ ಮಟ್ಟ ಕಡಿಮೆ ಇರುವವರು

ನೆಲ್ಲಿಕಾಯಿ ರಕ್ತದಲ್ಲಿನ ಸಕ್ಕರೆ ಮಟ್ಟದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಹೈಪೋಗ್ಲೈಸೀಮಿಯಾ (ರಕ್ತದಲ್ಲಿನ ಸಕ್ಕರೆ ಪ್ರಮಾಣ ಕಡಿಮೆ ಇರುವುದು) ಇರುವವರು ಅಥವಾ ಮಧುಮೇಹದ ಔಷಧಿಗಳನ್ನು ಸೇವಿಸುವವರು ಇದನ್ನು ನಿಯಮಿತವಾಗಿ ಸೇವಿಸುವ ಮೊದಲು ವೈದ್ಯರನ್ನು ಸಂಪರ್ಕಿಸುವುದು ಒಳಿತು.

ನೆಲ್ಲಿಕಾಯಿಯನ್ನು ಹೇಗೆ ಸೇವಿಸಬಹುದು?

  • ಬೆಳಿಗ್ಗೆ ಒಂದು ಅಥವಾ ಎರಡು ಹಸಿ ನೆಲ್ಲಿಕಾಯಿಯನ್ನು ಮಿತ ಪ್ರಮಾಣದಲ್ಲಿ ಸೇವಿಸಬಹುದು.
  • ಸಕ್ಕರೆ ಸೇರಿಸದ ನೆಲ್ಲಿಕಾಯಿ ಜ್ಯೂಸ್ ಕುಡಿಯಬಹುದು.
  • ನೆಲ್ಲಿಕಾಯಿ ಪುಡಿ ಅಥವಾ ಉಪ್ಪಿನಕಾಯಿ ರೂಪದಲ್ಲೂ ಸೇವಿಸಬಹುದು. ಆದರೆ ಉಪ್ಪು ಮತ್ತು ಸಕ್ಕರೆಯ ಪ್ರಮಾಣ ಕಡಿಮೆ ಇರುವುದನ್ನು ಆಯ್ಕೆ ಮಾಡುವುದು ಉತ್ತಮ.

ತಜ್ಞರ ಸಲಹೆ

ನೆಲ್ಲಿಕಾಯಿ ಆರೋಗ್ಯಕ್ಕೆ ಹಲವು ರೀತಿಯಲ್ಲಿ ಪ್ರಯೋಜನಕಾರಿಯಾದರೂ, ಇದು ಯಾವುದೇ ಕಾಯಿಲೆಗೆ ಪರ್ಯಾಯ ಚಿಕಿತ್ಸೆಯಲ್ಲ. ಸಮತೋಲನದ ಆಹಾರ, ನಿಯಮಿತ ವ್ಯಾಯಾಮ ಮತ್ತು ಆರೋಗ್ಯಕರ ಜೀವನಶೈಲಿಯೊಂದಿಗೆ ಮಿತ ಪ್ರಮಾಣದಲ್ಲಿ ನೆಲ್ಲಿಕಾಯಿ ಸೇವಿಸುವುದು ಉತ್ತಮ. ದೀರ್ಘಕಾಲದ ಕಾಯಿಲೆ, ಗರ್ಭಧಾರಣೆ ಅಥವಾ ನಿಯಮಿತ ಔಷಧೋಪಚಾರದಲ್ಲಿರುವವರು ವೈದ್ಯರ ಸಲಹೆಯಂತೆ ಮಾತ್ರ ಇದನ್ನು ತಮ್ಮ ಆಹಾರದಲ್ಲಿ ಸೇರಿಸಿಕೊಳ್ಳಬೇಕು.

ಕಾಂಗ್ರೆಸ್–ಸಿಜೆಪಿ ವಿರುದ್ಧ ಬಿಜೆಪಿ ಕಿಡಿ

0

ವಿಜಯಸಾಕ್ಷಿ ಸುದ್ದಿ, ಗದಗ: ನೀಟ್ ಪರೀಕ್ಷೆ ಅಕ್ರಮ ಪ್ರಕರಣ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಅಧಿಕೃತ ನಿವಾಸದ ಎದುರು ಕಾಂಗ್ರೆಸ್ ಮತ್ತು ಎಸ್‌ಎಫ್‌ಐ ನಡೆಸಿದ ಪ್ರತಿಭಟನೆ ಖಂಡಿಸಿ ಜಿಲ್ಲಾ ಬಿಜೆಪಿ ಘಟಕವು ಶುಕ್ರವಾರ ಗದಗ ನಗರದ ಗಾಂಧಿ ವೃತ್ತದಲ್ಲಿ ಭಾರಿ ಪ್ರತಿಭಟನೆ ನಡೆಸಿತು.

ಪ್ರತಿಭಟನೆಯ ವೇಳೆ ಕಾರ್ಯಕರ್ತರು ಮಾನವ ಸರಪಳಿ ನಿರ್ಮಿಸಿ ಕಾಂಗ್ರೆಸ್ ವಿರುದ್ಧ ಘೋಷಣೆಗಳನ್ನು ಕೂಗಿದರು. ಟಯರ್‌ಗೆ ಬೆಂಕಿ ಹಚ್ಚಲು ಯತ್ನಿಸಿದಾಗ ಪೊಲೀಸರು ತಡೆದರು.

ದೇಶವಿರೋಧಿ ಶಕ್ತಿಗಳಿಗೆ ಕಾಂಗ್ರೆಸ್ ಬೆಂಬಲ ನೀಡುತ್ತಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ದೇಶದ ಭದ್ರತೆ ವಿಚಾರದಲ್ಲಿ ರಾಜಕೀಯ ಮಾಡಬಾರದು ಎಂದು ಆಗ್ರಹಿಸಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಸಚಿವ ಕಳಕಪ್ಪ ಬಂಡಿ, ಪೊಲೀಸರ ಮೇಲೆ ಹಲ್ಲೆ ನಡೆಸುವವರನ್ನು ಯಾವುದೇ ಕಾರಣಕ್ಕೂ ಸಮರ್ಥಿಸಿಕೊಳ್ಳಲಾಗದು. ದೇಶದ ಭದ್ರತೆಗೆ ಧಕ್ಕೆ ತರುವ ಶಕ್ತಿಗಳ ವಿರುದ್ಧ ಕೇಂದ್ರ ಸರ್ಕಾರ ಕಠಿಣ ಕ್ರಮ ಕೈಗೊಳ್ಳುತ್ತಿದೆ. ಆದರೆ ಕಾಂಗ್ರೆಸ್ ನಾಯಕರು ರಾಜಕೀಯ ಲಾಭಕ್ಕಾಗಿ ಸುಳ್ಳು ಪ್ರಚಾರ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.

ಬಿಜೆಪಿ ಯುವ ಮುಖಂಡ ಉಮೇಶಗೌಡ ಪಾಟೀಲ ಮಾತನಾಡಿ, ಪ್ರಧಾನಿ ನಿವಾಸದ ಎದುರು ಪ್ರತಿಭಟನೆ ನಡೆಸುವ ಮೂಲಕ ದೇಶದ ಭದ್ರತೆಗೆ ಧಕ್ಕೆ ತರುವ ವಾತಾವರಣ ನಿರ್ಮಿಸಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ. ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ದೇಶದಲ್ಲಿ ಗೊಂದಲ ಸೃಷ್ಟಿಸುವ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದರು.

ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಎಂ.ಎಸ್. ಕರಿಗೌಡ್ರ ಮಾತನಾಡಿ, ಕಾಂಗ್ರೆಸ್ ದೇಶದಲ್ಲಿ ಅಶಾಂತಿ ಮತ್ತು ಗೊಂದಲದ ವಾತಾವರಣ ನಿರ್ಮಿಸಲು ಪ್ರಯತ್ನಿಸುತ್ತಿದೆ ಎಂದು ಟೀಕಿಸಿದರು.

ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಜು ಕುರುಡಗಿ, ನಗರಸಭೆ ಸದಸ್ಯ ಅನಿಲ ಅಬ್ಬಿಗೇರಿ, ರಾಘವೇಂದ್ರ ಯಳವತ್ತಿ ಸೇರಿದಂತೆ ಹಲವು ಮುಖಂಡರು ಮಾತನಾಡಿ, ದೇಶದ ಸಾರ್ವಭೌಮತ್ವಕ್ಕೆ ಧಕ್ಕೆ ತರುವ ಘಟನೆಗಳ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಮುಖಂಡರಾದ ಅಶೋಕ ನವಲಗುಂದ, ಎಂ.ಎಂ. ಹಿರೇಮಠ, ವಿಜಯಕುಮಾರ ಗಡ್ಡಿ, ಜಯಶ್ರೀ ಉಗಲಾಟ, ಅರವಿಂದ ಹುಲ್ಲೂರ, ಶಿವರಾಜಗೌಡ ಹಿರೇಮನಿಪಾಟೀಲ, ಸೋಮು ಹುಡೇದಮನಿ, ವಿನಾಯಕ ಮಾನ್ವಿ, ಶಶಿಧರ ದಿಂಡೂರ ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕುಗಳಿಂದ ಆಗಮಿಸಿದ್ದ ಬಿಜೆಪಿ ಪದಾಧಿಕಾರಿಗಳು ಹಾಗೂ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.

“ನೀಟ್ ಪರೀಕ್ಷೆಯಲ್ಲಿ ಅಕ್ರಮ ಎಸಗಿದವರ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಈಗಾಗಲೇ ಕ್ರಮ ಕೈಗೊಂಡಿದೆ. ಆದರೂ ಸುಖಾಸುಮ್ಮನೆ ಪ್ರತಿಭಟನೆ ನಡೆಸಿ ದೇಶದಲ್ಲಿ ಅರಾಜಕತೆ ಇದೆ ಎಂಬ ಭಾವನೆ ಮೂಡಿಸಲು ಕಾಂಗ್ರೆಸ್ ಯತ್ನಿಸುತ್ತಿದೆ.”

– ಕಳಕಪ್ಪ ಬಂಡಿ, ಮಾಜಿ ಸಚಿವ

ಪ್ರತಿ 4 ಸಾವಿರ ಜನರಿಗೆ ‘ಭಾರತ್ ಜೋಡೋ ಯುವ ಸಂಘ’ ರಚನೆ

0

ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲೆಯ ಯುವಜನರನ್ನು ನಾಯಕತ್ವ, ಕ್ರೀಡೆ, ಕೌಶಲ್ಯಾಭಿವೃದ್ಧಿ ಹಾಗೂ ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಉದ್ದೇಶದಿಂದ ಪ್ರತಿ 4 ಸಾವಿರ ಜನಸಂಖ್ಯೆಗೆ ಒಂದರಂತೆ ‘ಭಾರತ್ ಜೋಡೋ ಯುವ ಸಂಘ’ಗಳನ್ನು ರಚಿಸಲು ಜಿಲ್ಲಾಡಳಿತ ಮುಂದಾಗಿದೆ. ಸಂಘಗಳ ನೋಂದಣಿ ಪ್ರಕ್ರಿಯೆಯನ್ನು ಜುಲೈ 31ರೊಳಗೆ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಡೆದ ಭಾರತ್ ಜೋಡೋ ಯುವ ಸಂಘಗಳ ಸ್ಥಾಪನೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲಾಧಿಕಾರಿಗಳು ಮಾತನಾಡಿ, 16ರಿಂದ 35 ವರ್ಷದೊಳಗಿನ ಯುವಕ-ಯುವತಿಯರು ಸಂಘದ ಸದಸ್ಯರಾಗಲು ಅರ್ಹರಾಗಿದ್ದು, ಪ್ರತಿ ಸಂಘದಲ್ಲಿ 15 ಸದಸ್ಯರ ಕಾರ್ಯಕಾರಿ ಸಮಿತಿ ರಚಿಸಲಾಗುವುದು. ಸಮಿತಿ ಸದಸ್ಯರನ್ನು ಲಾಟರಿ ಪದ್ಧತಿಯ ಮೂಲಕ ಆಯ್ಕೆ ಮಾಡಲಾಗುತ್ತದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ, ಅಲ್ಪಸಂಖ್ಯಾತರು ಹಾಗೂ ಸಾಮಾನ್ಯ ವರ್ಗಗಳಿಗೆ ಮೀಸಲಾತಿ ಕಲ್ಪಿಸಲಾಗಿದ್ದು, ಕಾರ್ಯಕಾರಿ ಸಮಿತಿಯಲ್ಲಿ ಯಾವುದೇ ಸದಸ್ಯರಿಗೆ ಸತತ ಎರಡು ಅವಧಿಗೆ ಅವಕಾಶ ಇರುವುದಿಲ್ಲ ಎಂದು ತಿಳಿಸಿದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಶರಣು ಗೋಗೇರಿ ಮಾತನಾಡಿ, ರಾಜ್ಯಾದ್ಯಂತ 10 ಸಾವಿರ ಭಾರತ್ ಜೋಡೋ ಯುವ ಸಂಘಗಳನ್ನು ಸ್ಥಾಪಿಸುವ ಗುರಿ ಹೊಂದಲಾಗಿದೆ. ಜಿಲ್ಲೆಯಲ್ಲಿ ಸಂಘಗಳ ನೋಂದಣಿ ಪ್ರಕ್ರಿಯೆ ಆರಂಭವಾಗಿದ್ದು, BJYS ಪೋರ್ಟಲ್, ಮೊಬೈಲ್ ಆ್ಯಪ್, ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಹಾಗೂ ನಾಗರಿಕ ಸೇವಾ ಕೇಂದ್ರಗಳ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದರು.

ಅರ್ಜಿ ಸಲ್ಲಿಸಲು ಆಧಾರ್ ಕಡ್ಡಾಯವಾಗಿದ್ದು, ಸದಸ್ಯತ್ವಕ್ಕೆ 16ರಿಂದ 35 ವರ್ಷದೊಳಗಿನವರಾಗಿರಬೇಕು. ಒಂದು ಸಂಘ ರಚನೆಗೆ ಕನಿಷ್ಠ 100 ಸದಸ್ಯರು ಅಗತ್ಯವಿದ್ದು, ಸದಸ್ಯತ್ವ ನೋಂದಣಿ ಶುಲ್ಕ ₹10 ನಿಗದಿಪಡಿಸಲಾಗಿದೆ. ಸಂಘಗಳನ್ನು ಕರ್ನಾಟಕ ಸೊಸೈಟೀಸ್ ನೋಂದಣಿ ಕಾಯ್ದೆ-1960ರಡಿ ನೋಂದಾಯಿಸಬೇಕಿದ್ದು, ಜುಲೈ 31ರೊಳಗೆ ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಸೂಚಿಸಲಾಗಿದೆ.

ಪ್ರತಿ ಸಂಘವು ಕ್ರೀಡೆ, ಫಿಟ್‌ನೆಸ್, ಪರಿಸರ ಸಂರಕ್ಷಣೆ, ಕೌಶಲ್ಯಾಭಿವೃದ್ಧಿ, ಸಮುದಾಯ ಸೇವೆ, ಬಾಲ್ಯ ವಿವಾಹ ತಡೆ, ಅಪೌಷ್ಟಿಕತೆ ನಿವಾರಣೆ ಸೇರಿದಂತೆ ಸಮಾಜಮುಖಿ ಕಾರ್ಯಕ್ರಮಗಳನ್ನು ಕೈಗೊಳ್ಳಲಿದ್ದು, ಎಲ್ಲಾ ಚಟುವಟಿಕೆಗಳ ವಿವರವನ್ನು ಜಿಯೋ-ಟ್ಯಾಗ್ ಫೋಟೋಗಳೊಂದಿಗೆ ಸಾಫ್ಟ್‌ವೇರ್‌ನಲ್ಲಿ ಅಪ್‌ಲೋಡ್ ಮಾಡಬೇಕು ಎಂದು ತಿಳಿಸಲಾಯಿತು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್., ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಸಿ.ಆರ್. ಮುಂಡರಗಿ, ನಗರಸಭೆ ಪೌರಾಯುಕ್ತ ರಾಜಾರಾಮ ಪವಾರ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೊಟೂರು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

“ಯುವಶಕ್ತಿಯನ್ನು ಸಕಾರಾತ್ಮಕವಾಗಿ ಬಳಸಿಕೊಂಡರೆ ಸಮಾಜದಲ್ಲಿ ಉತ್ತಮ ಬದಲಾವಣೆ ತರಲು ಸಾಧ್ಯ. ಭಾರತ್ ಜೋಡೋ ಯುವ ಸಂಘಗಳು ಯುವಕರಲ್ಲಿ ನಾಯಕತ್ವ, ಶಿಸ್ತು ಹಾಗೂ ಸಾಮಾಜಿಕ ಬದ್ಧತೆಯನ್ನು ಬೆಳೆಸುವ ವೇದಿಕೆಯಾಗಬೇಕು. ಸಂಘಗಳ ರಚನೆ ಸಂಪೂರ್ಣ ಪಾರದರ್ಶಕವಾಗಿ ನಡೆಯಬೇಕು.”

— ಸಿ.ಎನ್. ಶ್ರೀಧರ್, ಜಿಲ್ಲಾಧಿಕಾರಿ

ಆ. 6, 7 ರಂದು ಗದಗ ಜಿಲ್ಲೆಗೆ ಉಪಲೋಕಾಯುಕ್ತರ ಭೇಟಿ

0

ವಿಜಯಸಾಕ್ಷಿ ಸುದ್ದಿ, ಗದಗ: ಗದಗ ಜಿಲ್ಲೆಯಲ್ಲಿ ದಾಖಲಾಗಿರುವ ವಿವಿಧ ದೂರುಗಳ ಪ್ರಗತಿ ಪರಿಶೀಲನೆ ಹಾಗೂ ಸಾರ್ವಜನಿಕ ಸಮಸ್ಯೆಗಳ ತ್ವರಿತ ಪರಿಹಾರಕ್ಕೆ ಒತ್ತು ನೀಡುವ ಉದ್ದೇಶದಿಂದ ಕರ್ನಾಟಕದ ಉಪಲೋಕಾಯುಕ್ತ ಕೆ.ಎನ್. ಫಣೀಂದ್ರ ಅವರು ಶುಕ್ರವಾರ ಜಿಲ್ಲಾಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು.

ಸಂವಾದದಲ್ಲಿ ಮಾತನಾಡಿದ ಅವರು, ಸಾರ್ವಜನಿಕರ ದೂರುಗಳಿಗೆ ಅಧಿಕಾರಿಗಳು ತ್ವರಿತವಾಗಿ ಸ್ಪಂದಿಸಬೇಕು. ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ಯಾವುದೇ ವಿಳಂಬವಿಲ್ಲದೆ ತಲುಪುವಂತೆ ಪ್ರಾಮಾಣಿಕತೆ ಮತ್ತು ಬದ್ಧತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಉಪಲೋಕಾಯುಕ್ತರು ಆಗಸ್ಟ್ 5ರಂದು ಗದಗ ಜಿಲ್ಲೆಗೆ ಆಗಮಿಸಲಿದ್ದು, ಆಗಸ್ಟ್ 6ರಂದು ಸಾರ್ವಜನಿಕರಿಂದ ದಾಖಲಾಗಿರುವ ದೂರುಗಳ ಪರಿಶೀಲನೆ ನಡೆಸಲಿದ್ದಾರೆ. ಆಗಸ್ಟ್ 7ರಂದು ಜಿಲ್ಲೆಯ ವಿವಿಧ ಸರ್ಕಾರಿ ಕಚೇರಿಗಳಿಗೆ ಅನಿರೀಕ್ಷಿತ ತಪಾಸಣೆ ಕೈಗೊಳ್ಳುವುದಾಗಿ ತಿಳಿಸಿದರು.

ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಮಾತನಾಡಿ, ಸರ್ಕಾರಿ ಕಚೇರಿಗಳಲ್ಲಿ ಸಮಯಪಾಲನೆ, ಶಿಸ್ತು ಮತ್ತು ಸ್ವಚ್ಛತೆಗೆ ಆದ್ಯತೆ ನೀಡಬೇಕು. ಸಾರ್ವಜನಿಕರಿಗೆ ಸೂಕ್ತ ಆಸನ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲಸೌಲಭ್ಯಗಳನ್ನು ಒದಗಿಸಬೇಕು. ಸರ್ಕಾರದ ಯೋಜನೆಗಳ ಅನುಷ್ಠಾನದಲ್ಲಿ ಯಾವುದೇ ಅನಗತ್ಯ ವಿಳಂಬವಾಗದಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ನಿರ್ದೇಶನ ನೀಡಿದರು.

ಸಭೆಯಲ್ಲಿ ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿರುವ ದೂರುಗಳು ಹಾಗೂ ಅವುಗಳ ವಿಲೇವಾರಿ ಕುರಿತು ಇಲಾಖಾವಾರು ಪ್ರಗತಿ ಪರಿಶೀಲನೆ ನಡೆಸಲಾಯಿತು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್, ಡಿವೈಎಸ್‌ಪಿ ಮಹಾಂತೇಶ ಸಜ್ಜನರ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೊಟೂರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ನೆಮ್ಮದಿ ಕೃಷಿಯತ್ತ ವಿದ್ಯಾರ್ಥಿಗಳ ಕೃಷಿ ಪಯಣ

0

ವಿಜಯಸಾಕ್ಷಿ ಸುದ್ದಿ, ಹಗರಿಬೊಮ್ಮನಹಳ್ಳಿ: ಪುಸ್ತಕಗಳಲ್ಲಿ ಓದಿದ ಕೃಷಿಯನ್ನು ನೇರವಾಗಿ ಹೊಲದಲ್ಲಿ ಕಂಡು, ಮಣ್ಣಿನ ಸುವಾಸನೆ ಅನುಭವಿಸಿ, ಔಷಧೀಯ ಸಸ್ಯಗಳ ಉಪಯೋಗ ಅರಿತು, ವಿಷಮುಕ್ತ ಕೃಷಿಯ ಮಹತ್ವ ತಿಳಿದುಕೊಂಡ ಅಪರೂಪದ ಅನುಭವ 300ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ದೊರೆಯಿತು.

ತಾಲ್ಲೂಕಿನ ಹೊಸಪೇಟೆ ರಸ್ತೆಯಲ್ಲಿರುವ ಮ್ಯಾನೋರ್ ಫಾರ್ಮ್‌ನಲ್ಲಿ ಆಯೋಜಿಸಿದ್ದ ಕೃಷಿ ಅಧ್ಯಯನ ಪ್ರವಾಸದಲ್ಲಿ ಕೊಟ್ಟೂರಿನ ಇಂದು ಶಿಕ್ಷಣ ಸಂಸ್ಥೆಯ ಸಿಬಿಎಸ್‌ಇ ವಿಭಾಗದ 3ರಿಂದ 6ನೇ ತರಗತಿಯ 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ 20ಕ್ಕೂ ಹೆಚ್ಚು ಶಿಕ್ಷಕರು ಭಾಗವಹಿಸಿ ಮೂರು ಗಂಟೆಗಳ ಕಾಲ ನೆಮ್ಮದಿ ಕೃಷಿಯ ಕುರಿತು ಪ್ರಾಯೋಗಿಕ ಪಾಠಗಳನ್ನು ಕಲಿತರು.

ನೆಮ್ಮದಿ ಕೃಷಿ ಪದ್ಧತಿಯ ರೂವಾರಿಯಾಗಿರುವ ವಸಂತ ಮಾಲವಿ, ಕೃಷಿ ಎಂದರೆ ಕೇವಲ ಬೆಳೆಯಲ್ಲ, ಅದು ಆರೋಗ್ಯಕರ ಬದುಕಿನ ಅಡಿಪಾಯ ಎಂದು ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಿಕೊಟ್ಟರು.

ತೋಟದಲ್ಲಿರುವ 58ಕ್ಕೂ ಹೆಚ್ಚು ಹಣ್ಣಿನ ಮರಗಳು, ಅಪರೂಪದ ಔಷಧೀಯ ಸಸ್ಯಗಳು ಹಾಗೂ ಕಳೆಗಳ ನಡುವೆಯೇ ಬೆಳೆಯುವ ಔಷಧಿ ಸಸ್ಯಗಳನ್ನು ತೋರಿಸಿ ಅವುಗಳ ಔಷಧೀಯ ಗುಣಗಳನ್ನು ವಿವರಿಸಿದರು. ವಿದ್ಯಾರ್ಥಿಗಳು ಕುತೂಹಲದಿಂದ ಪ್ರಶ್ನೆಗಳನ್ನು ಕೇಳಿದರೆ, ಶಿಕ್ಷಕರು ಮತ್ತು ಮಕ್ಕಳು ಟಿಪ್ಪಣಿಗಳನ್ನು ಮಾಡಿಕೊಂಡು ಕೃಷಿ ಜ್ಞಾನವನ್ನು ಅಳವಡಿಸಿಕೊಂಡರು.

ನೆಮ್ಮದಿ ಕೃಷಿ ಪದ್ಧತಿಯಿಂದ ಕಳೆದ ಎಂಟು ವರ್ಷಗಳಲ್ಲಿ ಪಡೆದ ಅನುಭವ, ಮಣ್ಣಿನ ಫಲವತ್ತತೆ ಹೆಚ್ಚಿಸುವ ವಿಧಾನ, ಯಾವುದೇ ಉಳುಮೆ ಮಾಡದೆ ಹಾಗೂ ತರಗೆಲೆಗಳನ್ನು ತೆಗೆಯದೆ ಕೃಷಿ ಮಾಡುವ ವಿಶೇಷತೆಯನ್ನೂ ಮಾಲವಿ ವಿವರಿಸಿದರು.

ಮ್ಯಾನೋರ್ ಫಾರ್ಮ್‌ನ ಒಡತಿ ಚಂದ್ರಲೇಖಾ ಮಾಲವಿ, ಆರೋಗ್ಯಕರ ಆಹಾರಕ್ಕಾಗಿ ಸಾಂಪ್ರದಾಯಿಕ, ಸಹಜ, ನೈಸರ್ಗಿಕ ಹಾಗೂ ನೆಮ್ಮದಿ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಳ್ಳುವುದು ಅನಿವಾರ್ಯ ಎಂದು ಹೇಳಿದರು.

ತೋಟದ ಮಣ್ಣಿನಲ್ಲಿರುವ ಸಾವಯವ ಇಂಗಾಲದ ಪ್ರಮಾಣ, ಎಲೆಗಳ ಕೊಳೆತದಿಂದ ಮಣ್ಣಿನ ಫಲವತ್ತತೆ ಹೆಚ್ಚುವ ವಿಧಾನವನ್ನು ಮಾಲವಿ ದಂಪತಿ ವಿದ್ಯಾರ್ಥಿಗಳಿಗೆ ಪ್ರಾತ್ಯಕ್ಷಿಕೆ ಮೂಲಕ ತೋರಿಸಿದರು. ಹಲವು ವಿದ್ಯಾರ್ಥಿಗಳು ಮಣ್ಣಿನ ಸುವಾಸನೆಯನ್ನು ಅನುಭವಿಸಿ, ಸ್ವಲ್ಪ ಮಣ್ಣನ್ನು ಮನೆಗೆ ಕೊಂಡೊಯ್ದು ಪಾಲಕರಿಗೆ ತೋರಿಸುವ ಉತ್ಸಾಹ ಪ್ರದರ್ಶಿಸಿದ್ದು ಕಾರ್ಯಕ್ರಮದ ವಿಶೇಷವಾಗಿತ್ತು.

ಈ ಸಂದರ್ಭದಲ್ಲಿ ಮಾತನಾಡಿದ ಇಂದು ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲ ಚೇತನ್ ಕುಮಾರ್, ಪುಸ್ತಕದ ಪಾಠಕ್ಕಿಂತ ಬದುಕಿನ ಪಾಠವನ್ನು ವಿದ್ಯಾರ್ಥಿಗಳಿಗೆ ನೀಡಿದ ಮ್ಯಾನೋರ್ ಫಾರ್ಮ್‌ಗೆ ಕೃತಜ್ಞತೆ ಸಲ್ಲಿಸಿದರು.

ಶಿಕ್ಷಕ ಜಗದೀಶ್ ಮಾತನಾಡಿ, “ಕೃಷಿಯನ್ನು ಪ್ರೀತಿಯಿಂದ ಮಾಡಿದರೆ ವಯಸ್ಸು ಅಡ್ಡಿಯಾಗುವುದಿಲ್ಲ ಎಂಬುದನ್ನು ಮಾಲವಿ ದಂಪತಿ ತಮ್ಮ ಜೀವನದ ಮೂಲಕ ತೋರಿಸಿದ್ದಾರೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕಾರ್ಯಕ್ರಮದ ಕೊನೆಯಲ್ಲಿ ವಿದ್ಯಾರ್ಥಿಗಳು ತಮ್ಮ ಪಾಲಕರನ್ನೂ ಮ್ಯಾನೋರ್ ಫಾರ್ಮ್‌ಗೆ ಕರೆತರುವ ಭರವಸೆ ನೀಡಿದ್ದು, ಮಾಲವಿ ದಂಪತಿ ವಿಷಮುಕ್ತ ಕೃಷಿಯ ಸಂದೇಶದೊಂದಿಗೆ ಅವರನ್ನು ಬೀಳ್ಕೊಟ್ಟರು.

“ಪಾಲಾಶ, ಅರ್ಜುನ, ಸೀತಾ ಅಶೋಕ, ರುದ್ರಾಕ್ಷಿ, ರಾಮಫಲ, ಲಕ್ಷ್ಮಣ ಫಲ ಸೇರಿದಂತೆ ಅನೇಕ ಔಷಧೀಯ ಹಾಗೂ ಹಣ್ಣಿನ ಸಸ್ಯಗಳ ಉಪಯೋಗವನ್ನು ಮಕ್ಕಳು ತಿಳಿದುಕೊಂಡಿದ್ದಾರೆ. ಪ್ರಕೃತಿಯೇ ನಮ್ಮ ಅತ್ಯುತ್ತಮ ಔಷಧಾಲಯ.”

– ಚಂದ್ರಲೇಖಾ ಮಾಲವಿ, ಮ್ಯಾನೋರ್ ಫಾರ್ಮ್

“ನಾವು ಏನನ್ನು ಬಿತ್ತುತ್ತೇವೆಯೋ ಅದನ್ನೇ ತಿನ್ನುತ್ತೇವೆ. ವಿಷ ಬಿತ್ತಿದರೆ ವಿಷವೇ ನಮ್ಮ ಊಟವಾಗುತ್ತದೆ. ಆರೋಗ್ಯಕರ ಬದುಕಿಗೆ ವಿಷಮುಕ್ತ ಕೃಷಿಯೇ ಏಕೈಕ ದಾರಿ.”

– ವಸಂತ ಮಾಲವಿ, ನೆಮ್ಮದಿ ಕೃಷಿ ರೂವಾರಿ

ಶಿರಹಟ್ಟಿ ರಸ್ತೆಗಳಿಗೆ ವಿಶೇಷ ಅನುದಾನ ಕೋರಿದ ಶಾಸಕ ಲಮಾಣಿ

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಲಕ್ಷ್ಮೇಶ್ವರ, ಶಿರಹಟ್ಟಿ ಹಾಗೂ ಮುಂಡರಗಿ ಭಾಗಗಳ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ವಿಶೇಷ ಅನುದಾನ ಮಂಜೂರು ಮಾಡುವಂತೆ ಶಾಸಕ ಡಾ. ಚಂದ್ರು ಲಮಾಣಿ ಅವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ ಅವರಿಗೆ ಮನವಿ ಸಲ್ಲಿಸಿದರು.

ಶುಕ್ರವಾರ ಬೆಂಗಳೂರಿನಲ್ಲಿ ಸಚಿವರನ್ನು ಭೇಟಿ ಮಾಡಿದ ಶಾಸಕರು, ಕ್ಷೇತ್ರದ ಅನೇಕ ಗ್ರಾಮಗಳ ಸಂಪರ್ಕ ರಸ್ತೆಗಳು ಹಲವು ವರ್ಷಗಳಿಂದ ಹಾಳಾಗಿದ್ದು, ದುರಸ್ತಿ ಕಾಮಗಾರಿ ನಡೆಯದ ಕಾರಣ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಮನವಿಯಲ್ಲಿ ವಿವರಿಸಿದ್ದಾರೆ.

ಮಳೆಗಾಲದಲ್ಲಿ ರಸ್ತೆಗಳು ಕೆಸರುಗುಂಡಿಗಳಾಗಿ, ಬೇಸಿಗೆಯಲ್ಲಿ ಧೂಳುಮಯವಾಗಿ ಮಾರ್ಪಡುತ್ತಿವೆ. ಇದರಿಂದ ಶಾಲಾ-ಕಾಲೇಜು ವಿದ್ಯಾರ್ಥಿಗಳು, ರೈತರು, ವ್ಯಾಪಾರಿಗಳು, ಗರ್ಭಿಣಿಯರು ಹಾಗೂ ತುರ್ತು ಆರೋಗ್ಯ ಸೇವೆ ಪಡೆಯುವ ರೋಗಿಗಳು ನಿತ್ಯ ಸಂಕಷ್ಟ ಎದುರಿಸುತ್ತಿದ್ದಾರೆ. ಕೃಷಿ ಉತ್ಪನ್ನಗಳನ್ನು ಮಾರುಕಟ್ಟೆಗೆ ಸಾಗಿಸಲು ರೈತರಿಗೆ ಹೆಚ್ಚುವರಿ ವೆಚ್ಚ ಹಾಗೂ ಸಮಯ ವ್ಯಯವಾಗುತ್ತಿದ್ದು, ಗ್ರಾಮೀಣ ಆರ್ಥಿಕ ಚಟುವಟಿಕೆಗಳ ಮೇಲೂ ಪ್ರತಿಕೂಲ ಪರಿಣಾಮ ಉಂಟಾಗಿದೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ಹಾಳಾಗಿರುವ ಗ್ರಾಮೀಣ ರಸ್ತೆಗಳ ಮರುನಿರ್ಮಾಣ, ಡಾಂಬರೀಕರಣ, ಅಗತ್ಯವಿರುವ ಕಡೆ ಸಿಸಿ ರಸ್ತೆ ನಿರ್ಮಾಣ ಹಾಗೂ ಗುಣಮಟ್ಟದ ರಸ್ತೆ ಕಾಮಗಾರಿಗಳಿಗೆ ವಿಶೇಷ ಅನುದಾನ ಮಂಜೂರು ಮಾಡುವಂತೆ ಶಾಸಕರು ಕೋರಿದ್ದಾರೆ.

ಮನವಿಯನ್ನು ಸ್ವೀಕರಿಸಿದ ಸಚಿವ ಈಶ್ವರ ಖಂಡ್ರೆ, ನಿಯಮಾನುಸಾರ ಪರಿಶೀಲಿಸಿ ರಸ್ತೆ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಬಿಸಿಯೂಟಕ್ಕೆ ನೀಡುವ ಅನುದಾನ ಹೆಚ್ಚಿಸಿ: ಸರ್ಕಾರಕ್ಕೆ ಶಿಕ್ಷಕರ ಸಂಘ ಮನವಿ

0

ವಿಜಯಸಾಕ್ಷಿ ಸುದ್ದಿ, ಗದಗ: ಶಾಲಾ ಬಿಸಿಯೂಟ ಯೋಜನೆಯಡಿ ನೀಡಲಾಗುತ್ತಿರುವ ಒಂದು ಮೊಟ್ಟೆಗೆ ₹6 ಅನುದಾನ ಪ್ರಸ್ತುತ ಮಾರುಕಟ್ಟೆ ದರಕ್ಕೆ ಹೊಂದಿಕೆಯಾಗುತ್ತಿಲ್ಲ. ಮೊಟ್ಟೆ ಖರೀದಿ, ಕುದಿಸುವುದು, ಸುಲಿಯುವುದು ಸೇರಿದಂತೆ ಹೆಚ್ಚುತ್ತಿರುವ ವೆಚ್ಚದಿಂದ ಶಾಲೆಗಳ ಮುಖ್ಯೋಪಾಧ್ಯಾಯರೇ ಆರ್ಥಿಕ ಹೊರೆ ಹೊರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದ್ದು, ಅನುದಾನವನ್ನು ತಕ್ಷಣ ಹೆಚ್ಚಿಸಬೇಕು ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಆಗ್ರಹಿಸಿದೆ.

ಈ ಕುರಿತು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಗದಗ ಗ್ರಾಮೀಣ ವಲಯ ಘಟಕವು ಜಿಲ್ಲಾಧ್ಯಕ್ಷ ವಿ.ಎಂ. ಹಿರೇಮಠ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿತು.

ಮನವಿಯಲ್ಲಿ, ಮೊಟ್ಟೆ ಹಾಗೂ ತರಕಾರಿ ದರಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಬಿಸಿಯೂಟ ಯೋಜನೆ ಅನುಷ್ಠಾನದಲ್ಲಿ ಶಾಲೆಗಳು ಆರ್ಥಿಕ ಸಂಕಷ್ಟ ಎದುರಿಸುತ್ತಿವೆ ಎಂದು ತಿಳಿಸಲಾಗಿದೆ.

ಇದರೊಂದಿಗೆ SATS ತಾಂತ್ರಿಕ ಸಮಸ್ಯೆಯಿಂದ ವಿದ್ಯಾರ್ಥಿಗಳ ಮಾಹಿತಿ ಸಿಂಕ್ ಆಗದಿರುವುದನ್ನು ಸರಿಪಡಿಸಬೇಕು. ಎಲ್‌ಕೆಜಿ ಹಾಗೂ ಯುಕೆಜಿ ಮಕ್ಕಳ ಹಾಜರಾತಿ ದಾಖಲಾಗದ ಕಾರಣ ಅನುದಾನ ನಿರ್ವಹಣೆಯಲ್ಲಿ ಉಂಟಾಗುತ್ತಿರುವ ತೊಂದರೆ ನಿವಾರಿಸಬೇಕು. ಅಕ್ಷರ ದಾಸೋಹ ಯೋಜನೆಗೆ ಅಗತ್ಯ ದಾಸ್ತಾನುಗಳನ್ನು ಕಾಲಮಿತಿಯಲ್ಲಿ ಪೂರೈಸಬೇಕು ಎಂದು ಒತ್ತಾಯಿಸಲಾಗಿದೆ.

ಕಳೆದ ಬೇಸಿಗೆ ರಜೆಯಲ್ಲಿ ಭಾರತ ಜನಗಣತಿ ಸಮೀಕ್ಷೆ ಕಾರ್ಯದಲ್ಲಿ ಪಾಲ್ಗೊಂಡ ಶಿಕ್ಷಕರಿಗೆ ಬಾಕಿ ಇರುವ ಗೌರವಧನವನ್ನು ತಕ್ಷಣ ಬಿಡುಗಡೆ ಮಾಡಬೇಕು. ಗಳಿಕೆ ರಜೆ ಜಮಾ ಮಾಡುವ ಕುರಿತು ಸಂಬಂಧಿಸಿದ ಇಲಾಖೆಗೆ ಅಗತ್ಯ ನಿರ್ದೇಶನ ನೀಡುವಂತೆಯೂ ಮನವಿಯಲ್ಲಿ ಆಗ್ರಹಿಸಲಾಗಿದೆ.

ಮನವಿಯನ್ನು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಡಿಡಿಪಿಐ ಆರ್.ಎಸ್. ಬುರಡಿ, ಜಿಲ್ಲಾ ಅಕ್ಷರ ದಾಸೋಹ ಅಧಿಕಾರಿ ಸರಸ್ವತಿ ಕನವಳ್ಳಿ ಹಾಗೂ ಪಿಎಂ ಪೋಷಣಾ ಯೋಜನೆ ಸಹಾಯಕ ನಿರ್ದೇಶಕ ಶಂಕರ ಹಡಗಲಿ ಅವರಿಗೆ ಸಲ್ಲಿಸಲಾಯಿತು. ಸಂಬಂಧಪಟ್ಟ ಇಲಾಖೆಯ ಗಮನ ಸೆಳೆದು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ಭರವಸೆ ನೀಡಿದರು.

“ಪ್ರಸ್ತುತ ನೀಡುತ್ತಿರುವ ₹6 ಅನುದಾನದಲ್ಲಿ ಮೊಟ್ಟೆ ಖರೀದಿ, ಕುದಿಸುವುದು ಮತ್ತು ವಿತರಣೆ ವೆಚ್ಚ ಭರಿಸುವುದು ಸಾಧ್ಯವಾಗುತ್ತಿಲ್ಲ. ಮಾರುಕಟ್ಟೆ ದರಕ್ಕೆ ಅನುಗುಣವಾಗಿ ಅನುದಾನವನ್ನು ಸರ್ಕಾರ ಹೆಚ್ಚಿಸಬೇಕು.”

— ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ

ನೀಟ್‌ ಹೆಸರಿನಲ್ಲಿ ದೇಶದ್ರೋಹಿಗಳ ಷಡ್ಯಂತ್ರ: ವಿಜಯಕುಮಾರ ಗಡ್ಡಿ

0

ವಿಜಯಸಾಕ್ಷಿ ಸುದ್ದಿ, ಗದಗ: ನೀಟ್‌ ಪರೀಕ್ಷೆ ವಿಚಾರವಾಗಿ ದೆಹಲಿಯ ಜಂತರ್‌ ಮಂತರ್‌ನಲ್ಲಿ ನಡೆದ ಪ್ರತಿಭಟನೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರದ ಜನಪ್ರಿಯತೆಗೆ ಧಕ್ಕೆ ತರಲು ನಡೆಸಿದ ರಾಜಕೀಯ ಷಡ್ಯಂತ್ರವಾಗಿದೆ ಎಂದು ಬಿಜೆಪಿ ಮುಖಂಡ ಹಾಗೂ ಉದ್ಯಮಿ ವಿಜಯಕುಮಾರ ಗಡ್ಡಿ ಆರೋಪಿಸಿದ್ದಾರೆ.

ಪತ್ರಿಕಾ ಪ್ರಕಟಣೆಯಲ್ಲಿ ಈ ಕುರಿತು ಪ್ರತಿಕ್ರಿಯಿಸಿರುವ ಅವರು, ನೀಟ್‌ ಪರೀಕ್ಷೆಯಲ್ಲಿ ಅಕ್ರಮ ಬೆಳಕಿಗೆ ಬಂದ ತಕ್ಷಣ ಕೇಂದ್ರ ಸರ್ಕಾರ ಮರು ಪರೀಕ್ಷೆ ನಡೆಸಿ, ಶೀಘ್ರ ಫಲಿತಾಂಶ ಪ್ರಕಟಿಸಿದ್ದಲ್ಲದೆ, ಅಕ್ರಮದಲ್ಲಿ ಭಾಗಿಯಾದವರ ವಿರುದ್ಧ ಕಾನೂನು ಕ್ರಮ ಕೈಗೊಂಡಿದೆ ಎಂದು ಹೇಳಿದ್ದಾರೆ.

ಇಂತಹ ಸಂದರ್ಭದಲ್ಲಿ ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಪ್ರತಿಪಕ್ಷಗಳು ಒತ್ತಾಯಿಸುತ್ತಿರುವುದು ರಾಜಕೀಯ ಪ್ರೇರಿತ ನಡೆ ಎಂದು ಆರೋಪಿಸಿದ ಅವರು, ಪ್ರತಿಭಟನೆಯ ಹೆಸರಿನಲ್ಲಿ ಪ್ರಧಾನಿ ನಿವಾಸದ ಮುಂದೆ ನಡೆಯುತ್ತಿರುವ ಪ್ರತಿಭಟನೆಗಳನ್ನು ಕೆಲವರು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳಲು ಯತ್ನಿಸುತ್ತಿದ್ದಾರೆ ಎಂದು ಟೀಕಿಸಿದರು.

ನೀಟ್‌ ಪ್ರತಿಭಟನೆಯಲ್ಲಿ ಭಾಗವಹಿಸಿರುವ ಬಹುತೇಕರಿಗೆ ಪರೀಕ್ಷೆಯೊಂದಿಗೆ ನೇರ ಸಂಬಂಧವೇ ಇಲ್ಲ. ಕೇಂದ್ರ ಸರ್ಕಾರವನ್ನು ವಿರೋಧಿಸುವ ಉದ್ದೇಶದಿಂದ ನೀಟ್‌ ವಿಷಯವನ್ನು ಬಳಸಿಕೊಂಡು ಹಿಂಸಾತ್ಮಕ ವಾತಾವರಣ ಸೃಷ್ಟಿಸುವ ಪ್ರಯತ್ನ ನಡೆದಿದೆ ಎಂದು ವಿಜಯಕುಮಾರ ಗಡ್ಡಿ ಆರೋಪಿಸಿದ್ದಾರೆ.

ದೇಶವನ್ನು ಪ್ರಾದೇಶಿಕತೆ ಮತ್ತು ರಾಜಕೀಯ ಉದ್ದೇಶಗಳ ಹೆಸರಿನಲ್ಲಿ ವಿಭಜಿಸಲು ಕೆಲ ಶಕ್ತಿಗಳು ಯತ್ನಿಸುತ್ತಿದ್ದು, ಇಂತಹ ದುರುದ್ದೇಶದ ಪ್ರತಿಭಟನೆಗಳಿಗೆ ಜನ ಬೆಂಬಲ ನೀಡುವುದಿಲ್ಲ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಬ್ಬಿಗೇರಿಯಲ್ಲಿ ₹20 ಲಕ್ಷ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ

0

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ರೋಣ ತಾಲೂಕಿನ ಅಬ್ಬಿಗೇರಿ ಗ್ರಾಮದಲ್ಲಿ ಮುಖ್ಯಮಂತ್ರಿ ಮೂಲಸೌಕರ್ಯ ಅಭಿವೃದ್ಧಿ ಯೋಜನೆ (CMIAP) ಅಡಿಯಲ್ಲಿ ₹20 ಲಕ್ಷ ವೆಚ್ಚದ ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಶುಕ್ರವಾರ ಭೂಮಿಪೂಜೆ ನೆರವೇರಿಸಲಾಯಿತು. ಇದೇ ವೇಳೆ ಕರ್ನಾಟಕ ರಾಜ್ಯ ಖನಿಜ ಅಭಿವೃದ್ಧಿ ನಿಗಮದ ಅನುದಾನದಲ್ಲಿ ಮಂಜೂರಾಗಿರುವ ಎರಡು ಬಸ್ ಶೆಲ್ಟರ್‌ಗಳ ನಿರ್ಮಾಣ ಕಾಮಗಾರಿಗೂ ಚಾಲನೆ ನೀಡಲಾಯಿತು.

ರೋಣ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಮಿಥುನ ಪಾಟೀಲ ಭೂಮಿಪೂಜೆ ನೆರವೇರಿಸಿ ಮಾತನಾಡಿ, ಗ್ರಾಮಸ್ಥರ ಬಹುಕಾಲದ ಬೇಡಿಕೆಗೆ ಸ್ಪಂದಿಸಿ ಶಾಸಕ ಹಾಗೂ ಕರ್ನಾಟಕ ರಾಜ್ಯ ಖನಿಜ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಎಸ್. ಪಾಟೀಲ ಅವರು ಎರಡು ಬಸ್ ಶೆಲ್ಟರ್‌ಗಳನ್ನು ಮಂಜೂರು ಮಾಡಿಸಿದ್ದು, ಇದೀಗ ಕಾಮಗಾರಿ ಆರಂಭಗೊಂಡಿದೆ ಎಂದು ತಿಳಿಸಿದರು.

2023ರಲ್ಲಿ ಶಾಸಕರಾದ ಬಳಿಕ ಜಿ.ಎಸ್. ಪಾಟೀಲ ಅವರು ರಸ್ತೆ, ಚರಂಡಿ, ಕುಡಿಯುವ ನೀರು, ಶಿಕ್ಷಣ ಸೇರಿದಂತೆ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಿದ್ದು, ಅಬ್ಬಿಗೇರಿ ಗ್ರಾಮದಲ್ಲಿಯೂ ಈಗಾಗಲೇ ಹಲವು ಸಿಸಿ ರಸ್ತೆ ಕಾಮಗಾರಿಗಳು ಪೂರ್ಣಗೊಂಡಿವೆ. ಮುಂದಿನ ದಿನಗಳಲ್ಲಿ ₹80 ಲಕ್ಷ ವೆಚ್ಚದ ಮತ್ತೊಂದು ಸಿಸಿ ರಸ್ತೆ ಕಾಮಗಾರಿಗೂ ಭೂಮಿಪೂಜೆ ನೆರವೇರಿಸಲಾಗುವುದು ಎಂದು ಹೇಳಿದರು.

ಗ್ರಾಮದಲ್ಲಿ ಮಹಿಳೆಯರಿಗಾಗಿ ಸಾರ್ವಜನಿಕ ಶೌಚಾಲಯ ನಿರ್ಮಿಸುವಂತೆ ಗ್ರಾಮಸ್ಥರು ಮನವಿ ಮಾಡಿದ್ದು, ಈ ಕುರಿತು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದೆ ಎಂದು ಅವರು ಭರವಸೆ ನೀಡಿದರು.

ಗ್ರಾಮದ ಅಭಿವೃದ್ಧಿಗೆ ಸಾರ್ವಜನಿಕರ ಸಹಕಾರ ಅಗತ್ಯವಾಗಿದ್ದು, ನಿರ್ಮಾಣಗೊಳ್ಳುತ್ತಿರುವ ಎರಡು ಬಸ್ ಶೆಲ್ಟರ್‌ಗಳ ಕಾಮಗಾರಿ ಸುಮಾರು ಎರಡು ತಿಂಗಳೊಳಗೆ ಪೂರ್ಣಗೊಂಡು ಸಾರ್ವಜನಿಕರ ಸೇವೆಗೆ ಲಭ್ಯವಾಗಲಿವೆ ಎಂದರು.

ಕಾರ್ಯಕ್ರಮದಲ್ಲಿ ಯಲ್ಲಾಲಿಂಗೇಶ್ವರ ಮಠದ ಬಸವರಾಜ ಶರಣರು ಸಾನ್ನಿಧ್ಯ ವಹಿಸಿದ್ದರು. ಬಸವರಾಜ ಪಲ್ಲೇದ, ಗುರುನಾಥ ಅವರಡ್ಡಿ, ಬಸವರಾಜ ತಳವಾರ, ಎಚ್.ಟಿ. ದ್ವಾಸಲ, ಅಂದಪ್ಪ ವೀರಾಪೂರ, ಸುರೇಶ ಬಸವರಡ್ಡೇರ, ಸಿ.ಕೆ. ಕಾಳಗಿ, ಸಕ್ರಗೌಡ ಪಾಟೀಲ, ಎಂ.ಕೆ. ಅಂಗಡಿ, ಸುರೇಶ ಶಿರೋಳ, ರಾಮನಗೌಡ ಹಲಕುರ್ಕಿ, ಮಹಾಂತೇಶ ತಳವಾರ, ಶರಣಪ್ಪಗೌಡ ಮಾದಿನೂರ, ಮಲಕಾಜಪ್ಪ ಕಲ್ಲೆಶ್ಯಾಣಿ, ಸೋಮು ಶಿರೋಳ, ಮುತ್ತಣ್ಣ ಕುಕನೂರ, ಸಿದ್ದು ಹನುಮನಾಳ, ಬಸವರಾಜ ಕಮ್ಮಾರ, ಬಾಬು ಬನ್ನಿಕೊಪ್ಪ, ಶಿವಾನಂದ ಗುಗ್ಗರಿ, ಬಸವರಾಜ ಗುಗ್ಗರಿ, ಶಶಿ ಸಂಗನಾಳ, ತಿರುಮಲಿ ಬಂಡಿವಡ್ಡರ, ರಮೇಶ ಕುಡಗುಂಟಿ, ಶಂಕರ ಐಹೋಳಿ, ಸುಭಾಷ ಕೆಂಗಾರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಗ್ರಾಮದ ಮುಖಂಡರು, ಯುವಕರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.