ಬೆಳಗಾವಿ: ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತು ಯಾವುದೇ ಒತ್ತಡ ಇಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಪಕ್ಷದ ಹೈಕಮಾಂಡ್ ನಾಯಕರು ಇಂದು ಅಥವಾ ನಾಳೆ ರಾಜ್ಯಕ್ಕೆ ಆಗಮಿಸುವ ನಿರೀಕ್ಷೆಯಿದ್ದು, ಅವರು ಕರೆಯುವ ಸಮಯದಲ್ಲಿ ದೆಹಲಿಗೆ ತೆರಳಿ ಚರ್ಚೆ ನಡೆಸುವುದಾಗಿ ತಿಳಿಸಿದ್ದಾರೆ.
ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಬಗ್ಗೆ ಕೇಳಿದ ಪ್ರಶ್ನೆಗೆ, “ಒತ್ತಡ ಎಂಬುದೇ ಇಲ್ಲ. ನಮ್ಮ ನಾಯಕರು ಬಂದ ಬಳಿಕ ಯಾವಾಗ ಕರೆಯುತ್ತಾರೋ ಆಗ ನಾನು ಹೋಗುತ್ತೇನೆ” ಎಂದು ಉತ್ತರಿಸಿದರು.
ರಾಜ್ಯದ ಹಲವು ಭಾಗಗಳಲ್ಲಿ ಮಳೆ ಕೊರತೆ ಹಿನ್ನೆಲೆಯಲ್ಲಿ ಮೋಡ ಬಿತ್ತನೆ (Cloud Seeding) ನಡೆಸುವಂತೆ ಶಾಸಕರು ಒತ್ತಾಯಿಸಿದ್ದಾರೆ. ಈ ಕುರಿತು ಕಾನೂನು ಹಾಗೂ ಹಣಕಾಸು ಇಲಾಖೆಗಳೊಂದಿಗೆ ಸಮಾಲೋಚನೆ ನಡೆಸಿ ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದು ಸಿಎಂ ಹೇಳಿದರು.
ಸುವರ್ಣ ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ರಾಜ್ಯದ ಎಲ್ಲಾ ದೇವಸ್ಥಾನಗಳ ಹುಂಡಿಗಳ ಸುರಕ್ಷತೆಯನ್ನು ಮತ್ತಷ್ಟು ಬಲಪಡಿಸುವಂತೆ ತೀರ್ಮಾನ ಕೈಗೊಂಡಿರುವುದಾಗಿ ತಿಳಿಸಿದ ಅವರು, ದೇವಸ್ಥಾನಗಳಲ್ಲಿ ಭದ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುವುದು ಎಂದು ಹೇಳಿದರು.
ಬೆಳಗಾವಿಯಲ್ಲಿ ಆರ್ಎಸ್ಎಸ್ ಸಭೆ ಆಯೋಜಿಸಿರುವ ಕುರಿತು ಪ್ರತಿಕ್ರಿಯಿಸಿದ ಸಿಎಂ, ಈ ಬಗ್ಗೆ ಇನ್ನೂ ಅಧಿಕೃತ ವರದಿ ಬಂದಿಲ್ಲ. ಪತ್ರಿಕೆಗಳಲ್ಲಿ ಮಾಹಿತಿ ನೋಡಿದ್ದೇನೆ. ವರದಿ ಕೇಳಿದ್ದೇನೆ. ಕಾನೂನಿನಲ್ಲಿ ಅವಕಾಶ ಇದ್ದರೆ ಅನುಮತಿ ಸಿಗುತ್ತದೆ, ಇಲ್ಲದಿದ್ದರೆ ಸಿಗುವುದಿಲ್ಲ. ಎಲ್ಲರಿಗೂ ಒಂದೇ ರೀತಿಯ ಕಾನೂನು ಅನ್ವಯವಾಗುತ್ತದೆ ಎಂದು ಹೇಳಿದರು.
ಬೆಂಗಳೂರಿನಲ್ಲಿ ಬೀದಿಬದಿ ವ್ಯಾಪಾರಿಗಳ ತೆರವು ಕಾರ್ಯಾಚರಣೆ ಕುರಿತು ಮಾತನಾಡಿದ ಮುಖ್ಯಮಂತ್ರಿ, ಸಂಚಾರ ದಟ್ಟಣೆ ಸಮಸ್ಯೆ ನಿವಾರಣೆಗೆ ಎಲ್ಲಾ ಪಕ್ಷಗಳ ಶಾಸಕರೊಂದಿಗೆ ಈ ಹಿಂದೆ ಚರ್ಚೆ ನಡೆಸಲಾಗಿತ್ತು. ಸರ್ಕಾರ ಗುರುತಿಸಿರುವ ಸ್ಥಳಗಳಲ್ಲಿ ಮಾತ್ರ ವ್ಯಾಪಾರ ನಡೆಸಬೇಕು. ಮುಖ್ಯ ರಸ್ತೆಗಳಲ್ಲಿ ಅಂಗಡಿ ಇಡಲು ಅವಕಾಶ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಸುಮಾರು 60 ಸಾವಿರ ಬೀದಿಬದಿ ವ್ಯಾಪಾರಿಗಳ ಪೈಕಿ 30 ಸಾವಿರ ಮಂದಿ ಮಾತ್ರ ನೋಂದಣಿ ಮಾಡಿಕೊಂಡಿದ್ದಾರೆ. ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಕ್ರಮ ಜಾರಿಗೊಳಿಸಲಾಗುತ್ತಿದ್ದು, ಇಂದು ಪೊಲೀಸ್ ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.
ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು ಸುಪ್ರೀಂ ಕೋರ್ಟ್ಗೆ ತೆರಳಿರುವ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ನ್ಯಾಯಾಲಯ ಆಗಸ್ಟ್ ತಿಂಗಳೊಳಗೆ ಗಡುವು ನೀಡಿದೆ. ಅಧಿಕಾರಿಗಳಿಗೆ ಕೆಲವು ಆಡಳಿತಾತ್ಮಕ ಸಮಸ್ಯೆಗಳಿರುವ ಹಿನ್ನೆಲೆಯಲ್ಲಿ ಅವರೇ ಈ ವಿಚಾರವನ್ನು ನೋಡಿಕೊಳ್ಳುತ್ತಿದ್ದಾರೆ. ಸರ್ಕಾರ ಈ ಪ್ರಕ್ರಿಯೆಯಲ್ಲಿ ನೇರವಾಗಿ ಹಸ್ತಕ್ಷೇಪ ಮಾಡುವುದಿಲ್ಲ. ಆದರೆ ಜಿಬಿಎ ಚುನಾವಣೆಗೆ ಸರ್ಕಾರ ಸಂಪೂರ್ಣ ಸಿದ್ಧತೆ ಮಾಡಿಕೊಂಡಿದೆ ಎಂದು ತಿಳಿಸಿದರು.

