Home Blog

ಸಮೃದ್ಧ ರಾಷ್ಟ್ರ ನಿರ್ಮಾಣಕ್ಕೆ ಸಂಕಲ್ಪ ಮಾಡೋಣ: ತಹಸೀಲ್ದಾರ್ ರಾಘವೇಂದ್ರ

0

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಜಾತಿ, ಧರ್ಮ, ಭಾಷೆಗಳನ್ನು ಮೀರಿ ಸುಖ, ಶಾಂತಿ ಹಾಗೂ ಸಮೃದ್ಧ ರಾಷ್ಟ್ರ ನಿರ್ಮಾಣಕ್ಕಾಗಿ ನಾವೆಲ್ಲರೂ ಸಂಕಲ್ಪ ಮಾಡೋಣ ಎಂದು ತಹಸೀಲ್ದಾರ್ ಕೆ. ರಾಘವೇಂದ್ರ ರಾವು ಕರೆ ನೀಡಿದರು.

ಶನಿವಾರ ಶಿರಹಟ್ಟಿಯ ಎಸ್.ಎಂ. ಡಬಾಲಿ ತಾಲೂಕು ಕ್ರೀಡಾಂಗಣದಲ್ಲಿ ತಾಲೂಕು ಆಡಳಿತದ ವತಿಯಿಂದ ಆಯೋಜಿಸಿದ್ದ 80ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ಗೌರವ ಧ್ವಜವಂದನೆ ಸ್ವೀಕರಿಸಿ ಅವರು ಮಾತನಾಡಿದರು.

ರಾಷ್ಟ್ರದ ಸರ್ವತೋಮುಖ ಪ್ರಗತಿಗೆ ಯುವಶಕ್ತಿ ಹಾಗೂ ವಿದ್ಯಾರ್ಥಿಗಳು ದೇಶಭಕ್ತಿ, ನಿಷ್ಠೆ, ಶಿಸ್ತು, ಪ್ರಜ್ಞೆ, ವಿಶ್ವಾಸ ಮತ್ತು ಸ್ವಾವಲಂಬನೆಯಂತಹ ಗುಣಗಳನ್ನು ಬೆಳೆಸಿಕೊಳ್ಳಬೇಕು. ಸಹಸ್ರಾರು ವರ್ಷಗಳ ಗುಲಾಮಗಿರಿಯಿಂದ ಹೊರಬಂದು, ಲಕ್ಷಾಂತರ ಜನರ ತ್ಯಾಗ ಮತ್ತು ಬಲಿದಾನದಿಂದ ದೊರೆತ ಸ್ವಾತಂತ್ರ್ಯವನ್ನು ರಕ್ಷಿಸಿ, ಮತ್ತಷ್ಟು ಬಲಪಡಿಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದರು.

ಆ.15ರ ಸ್ವಾತಂತ್ರ್ಯ ದಿನ ಪ್ರತಿಯೊಬ್ಬ ಭಾರತೀಯನಿಗೂ ಹೆಮ್ಮೆಯ ಹಾಗೂ ಸಂಭ್ರಮದ ದಿನವಾಗಿದೆ. ಬ್ರಿಟಿಷರ ಆಳ್ವಿಕೆಯಿಂದ ದೇಶವನ್ನು ಮುಕ್ತಗೊಳಿಸಲು ಹೋರಾಡಿದ ಸ್ವಾತಂತ್ರ್ಯ ಹೋರಾಟಗಾರರು ಹಾಗೂ ದೇಶಕ್ಕಾಗಿ ಜೀವನವನ್ನೇ ಮುಡಿಪಾಗಿಟ್ಟ ಮಹನೀಯರನ್ನು ಸ್ಮರಿಸುವ ಸುದಿನ ಇದಾಗಿದೆ. ಅನೇಕರು ಕುಟುಂಬ, ಆಸ್ತಿ, ಸುಖ-ಸಂತೋಷಗಳನ್ನು ತ್ಯಜಿಸಿ ಹೋರಾಟ ನಡೆಸಿದರೆ, ಕೆಲವರು ಸೆರೆವಾಸ ಅನುಭವಿಸಿದರು. ಇನ್ನು ಕೆಲವರು ದೇಶದ ಸ್ವಾತಂತ್ರ್ಯಕ್ಕಾಗಿ ಪ್ರಾಣವನ್ನೇ ಅರ್ಪಿಸಿದರು. ಅವರ ತ್ಯಾಗ, ಬಲಿದಾನ ಮತ್ತು ದೇಶಪ್ರೇಮದ ಫಲವಾಗಿ ಇಂದು ನಾವು ಸ್ವತಂತ್ರ ರಾಷ್ಟ್ರದಲ್ಲಿ ನೆಮ್ಮದಿಯಿಂದ ಬದುಕುತ್ತಿದ್ದೇವೆ ಎಂದು ಹೇಳಿದರು.

ಸ್ವಾತಂತ್ರ್ಯ ದಿನಾಚರಣೆ ಕೇವಲ ಧ್ವಜಾರೋಹಣ ಹಾಗೂ ಸಿಹಿ ವಿತರಿಸುವ ಕಾರ್ಯಕ್ರಮಕ್ಕೆ ಸೀಮಿತವಾಗಬಾರದು. ಸ್ವಾತಂತ್ರ್ಯ ಹೋರಾಟಗಾರರ ತ್ಯಾಗದ ಮಹತ್ವವನ್ನು ಯುವಜನರಿಗೆ ತಿಳಿಸುವುದು, ದೇಶದ ಏಕತೆ, ಅಖಂಡತೆ ಹಾಗೂ ಸಾರ್ವಭೌಮತ್ವವನ್ನು ಕಾಪಾಡುವ ಸಂಕಲ್ಪ ಮಾಡುವುದು ಈ ದಿನದ ನಿಜವಾದ ಆಶಯವಾಗಬೇಕು. ಜಾತಿ, ಧರ್ಮ, ಭಾಷೆ ಹಾಗೂ ಪ್ರಾದೇಶಿಕ ಭೇದಗಳನ್ನು ಬದಿಗೊತ್ತಿ ದೇಶದ ಹಿತವೇ ಮುಖ್ಯ ಎಂಬ ಭಾವನೆಯೊಂದಿಗೆ ಪ್ರತಿಯೊಬ್ಬರೂ ಮುನ್ನಡೆಯಬೇಕು. ಮಹನೀಯರು ಕಂಡ ಕನಸಿನ ಭಾರತ ನಿರ್ಮಿಸುವ ಜವಾಬ್ದಾರಿ ಇಂದಿನ ಪೀಳಿಗೆಯ ಮೇಲಿದೆ ಎಂದರು.

ನಂತರ ಶಾಲಾ ವಿದ್ಯಾರ್ಥಿಗಳಿಂದ ದೇಶಭಕ್ತಿ ಸಾರುವ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಶಾಸಕ ಚಂದ್ರು ಲಮಾಣಿ ಅಧ್ಯಕ್ಷತೆ ವಹಿಸಿದ್ದರು. ಸಿಪಿಐ ಬಿ.ವಿ. ನ್ಯಾಮಗೌಡ, ಬಿಇಒ ಶಿವರಾಜ ಸಿಮಿಕೇರಿ, ತಾಪಂ ಇಒ ರಾಮಣ್ಣ ದೊಡ್ಡಮನಿ, ಪಪಂ ಮುಖ್ಯಾಧಿಕಾರಿ ಎನ್.ಎಂ. ಹಾದಿಮನಿ, ವಿ.ಎ. ಮುಳಗುಂದಮಠ, ಬಸವರಾಜ ಕಾತರಾಳ, ಸಂತೋಷ ಅಸ್ಕಿ, ಎಚ್.ಜೆ. ಬಾವಿಕಟ್ಟಿ, ವೀರಯ್ಯ ಮಠಪತಿ, ಗಿರಿಜಾ ಪೂಜಾರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ದೇಶಪ್ರೇಮದೊಂದಿಗೆ ಸಾಮರಸ್ಯದಿಂದ ಬಾಳೋಣ: ಸುರೇಶ ಹಳ್ಳಿಕೇರಿ

0

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ಸ್ವಾತಂತ್ರ್ಯಕ್ಕಾಗಿ ತ್ಯಾಗ, ಬಲಿದಾನ ಮಾಡಿದ ಹಿರಿಯರನ್ನು ಸ್ಮರಿಸುವ ದಿನವೇ ಆಗಸ್ಟ್ 15. ದೇಶಕ್ಕಾಗಿ ಹೋರಾಡಿದ ಮಹನೀಯರ ದೇಶಪ್ರೇಮವನ್ನು ನೆನೆಯುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯವಾಗಿದ್ದು, ಈ ದಿನ ಭಾರತೀಯರಿಗೆ ಸುದಿನವಾಗಿದೆ ಎಂದು ಗೃಹರಕ್ಷಕ ದಳದ ನರೇಗಲ್ಲ ಘಟಕದ ಅಧಿಕಾರಿ ಸುರೇಶ ಹಳ್ಳಿಕೇರಿ ಹೇಳಿದರು.

ನರೇಗಲ್ಲದ ಗೃಹರಕ್ಷಕ ದಳದ ಕಾರ್ಯಾಲಯದಲ್ಲಿ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ನಿಡಗುಂದಿ ಅನ್ನದಾನೇಶ್ವರ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಎಂ.ಬಿ. ಕೊಪ್ಪದ ಮಾತನಾಡಿ, ಸೇವೆ ಮಾಡುವ ಅವಕಾಶ ಎಲ್ಲರಿಗೂ ದೊರೆಯುವುದಿಲ್ಲ. ಆದರೆ ವೃತ್ತಿಯ ಕರ್ತವ್ಯದ ಜೊತೆಗೆ ದೇಶಸೇವೆಯನ್ನೂ ಮಾಡುತ್ತಿರುವ ಗೃಹರಕ್ಷಕ ದಳದ ಸಿಬ್ಬಂದಿಯ ಸೇವೆ ಶ್ಲಾಘನೀಯ. ದೇಶದ ಶಾಂತಿ, ಸುರಕ್ಷತೆ ಹಾಗೂ ಸುವ್ಯವಸ್ಥೆ ಕಾಪಾಡುವಲ್ಲಿ ಗೃಹರಕ್ಷಕ ದಳದ ಸೇವೆ ಮಹತ್ವದ್ದಾಗಿದೆ ಎಂದರು.

ಈ ಸಂದರ್ಭದಲ್ಲಿ ಗೃಹರಕ್ಷಕ ದಳದ ಸದಸ್ಯರು ಸಮಾನತೆ, ಸಹೋದರತ್ವ ಹಾಗೂ ಸಾಮರಸ್ಯದೊಂದಿಗೆ ಬಾಳುವುದರ ಜೊತೆಗೆ ದೇಶದ ಪ್ರಗತಿಗಾಗಿ ಒಗ್ಗಟ್ಟಿನಿಂದ ಶ್ರಮಿಸುವುದಾಗಿ ಪ್ರತಿಜ್ಞೆ ಸ್ವೀಕರಿಸಿದರು.

ಕಾರ್ಯಕ್ರಮದಲ್ಲಿ ಎಂ.ಬಿ. ಗೋಡಿ, ಪಿ.ಎಸ್. ಸಾಬಳೆ, ಜೆ.ಡಿ. ಬಂಡೀವಡ್ಡರ, ವಿ.ವಿ. ಇಟಗಿ, ಕೆ.ವಿ. ಹಾಳಕೇರಿ, ಎಸ್.ವೈ. ಕುಂಬಾರ, ಎಂ.ಬಿ. ಕಡೆತೋಟದ, ಎಸ್.ವಿ. ಮುಸಿಗೇರಿ, ಬಿ.ಬಿ. ನೆಲ್ಲೂರ, ಎ.ಬಿ. ಕುರುಡಗಿ, ವಿರೂಪಾಕ್ಷ ಇಟಗಿ, ಎಂ.ಕೆ. ಅರಮನಿ, ಎಸ್.ಬಿ. ಸವಡಿ ಸೇರಿದಂತೆ ಹಲವಾರು ಗೃಹರಕ್ಷಕ ದಳದ ಸಿಬ್ಬಂದಿ ಉಪಸ್ಥಿತರಿದ್ದರು.

ವಚನಕಾರ್ತಿಯರ ನುಡಿಯಲ್ಲಿ ಸಮಾನತೆಯ ದೀವಿ; ಡಾ. ನೀಲಮ್ಮತಾಯಿ ಅಸುಂಡಿ

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ವಚನ ಸಾಹಿತ್ಯ ಕೇವಲ ಸಾಹಿತ್ಯದ ಪ್ರಕಾರವಲ್ಲ, ಅದು ಸಾಮಾಜಿಕ ಪರಿವರ್ತನೆಯ ಶಕ್ತಿಶಾಲಿ ಮಾಧ್ಯಮ. ವಚನಕಾರ್ತಿಯರು ತಮ್ಮ ಅಂತರಂಗದ ಅನುಭವ, ಆತ್ಮಾಭಿಮಾನ ಹಾಗೂ ವೈಚಾರಿಕ ಪ್ರಜ್ಞೆಯ ಮೂಲಕ ಅಸಮಾನತೆ, ಕಂದಾಚಾರ ಮತ್ತು ತಾರತಮ್ಯಗಳನ್ನು ಪ್ರಶ್ನಿಸಿ, ಸಮಾನತೆ ಹಾಗೂ ಮಾನವೀಯತೆಯ ದೀವಿಗೆಯನ್ನು ಬೆಳಗಿಸಿದ್ದಾರೆ ಎಂದು ಪೂಜ್ಯ ಶಿವಶರಣೆ ಡಾ. ನೀಲಮ್ಮತಾಯಿ ಅಸುಂಡಿ ಹೇಳಿದರು.

ಲಕ್ಷ್ಮೇಶ್ವರದ ಅಕ್ಕಮಹಾದೇವಿ ದೇವಸ್ಥಾನದಲ್ಲಿ ಶುಕ್ರವಾರ ನಡೆದ ‘ಶ್ರಾವಣ ಸಂಜೆ’ ಕಾರ್ಯಕ್ರಮದಲ್ಲಿ ಶ್ರೀಮತಿ ಲಲಿತಾ ಕೆರಿಮನಿ ಹಾಗೂ ಶ್ರೀಮತಿ ಮೇಘಾ ಹುಕ್ಕೇರಿ ಸಂಪಾದಿಸಿರುವ ‘ಸಮಾನತೆ ಸಾರಿದ ವಚನಕಾರ್ತಿಯರು’ ಕೃತಿ ಬಿಡುಗಡೆ ಸಮಾರಂಭದಲ್ಲಿ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

ವಚನಕಾರ್ತಿಯರ ನುಡಿಗಳು ಅಂದಿನ ಸಾಮಾಜಿಕ ವ್ಯವಸ್ಥೆಗೆ ಕನ್ನಡಿ ಹಿಡಿದಿದ್ದಲ್ಲದೆ, ಮಹಿಳೆಯ ಅಸ್ತಿತ್ವ, ಸ್ವಾಭಿಮಾನ ಹಾಗೂ ಆತ್ಮಗೌರವದ ಪ್ರತೀಕವಾಗಿವೆ. ತಮ್ಮ ಅನುಭವದ ನೆಲೆಯಲ್ಲಿ ಕಟ್ಟಿಕೊಟ್ಟ ವಿಚಾರಗಳನ್ನು ಕಾಲದ ಗಡಿಯನ್ನು ದಾಟಿಸಿ ಇಂದಿಗೂ ಸಮಾಜಕ್ಕೆ ದಾರಿದೀಪವಾಗಿಸಿದ್ದಾರೆ. ಮಹಿಳೆಯರಿಗೆ ಸಮಾನ ಅವಕಾಶ, ಗೌರವ ಹಾಗೂ ಸ್ವಾತಂತ್ರ್ಯ ದೊರೆಯಬೇಕೆಂಬ ಆಶಯವನ್ನು ಅವರು ಶತಮಾನಗಳ ಹಿಂದೆಯೇ ಪ್ರತಿಪಾದಿಸಿದ್ದರು ಎಂದರು.

‘ಶ್ರಾವಣ ಸಂಜೆ’ ಕಾರ್ಯಕ್ರಮ ಎರಡು ದಶಕಗಳನ್ನು ಪೂರೈಸಿರುವ ಸವಿನೆನಪಿನಲ್ಲಿ ‘ಸಮಾನತೆ ಸಾರಿದ ವಚನಕಾರ್ತಿಯರು’ ಕೃತಿ ಹೊರತಂದಿರುವುದು ಅರ್ಥಪೂರ್ಣ ಹಾಗೂ ಅಭಿನಂದನೀಯ ಕಾರ್ಯವಾಗಿದೆ. ವಚನಕಾರ್ತಿಯರ ಚಿಂತನೆಗಳನ್ನು ಒಂದೆಡೆ ದಾಖಲಿಸಿ, ಮುಂದಿನ ಪೀಳಿಗೆಗೆ ಪರಿಚಯಿಸುವ ಮೂಲಕ ಕೃತಿಯ ಸಂಪಾದಕರು ಸಾಹಿತ್ಯಿಕ ಹಾಗೂ ಸಾಮಾಜಿಕ ಹೊಣೆಗಾರಿಕೆ ಮೆರೆದಿದ್ದಾರೆ ಎಂದು ಡಾ. ನೀಲಮ್ಮತಾಯಿ ಅಸುಂಡಿ ಶ್ಲಾಘಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರತಿಮಾ ಮಹಾಜನಶೆಟ್ಟರ ಮಾತನಾಡಿ, ವಚನಕಾರ್ತಿಯರ ಸಾಹಿತ್ಯದಲ್ಲಿರುವ ವೈಚಾರಿಕತೆ, ಸಾಮಾಜಿಕ ಕಳಕಳಿ ಹಾಗೂ ಮಾನವೀಯ ಮೌಲ್ಯಗಳನ್ನು ಇಂದಿನ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ ಎಂದರು.

ಕೃತಿ ಬಿಡುಗಡೆ ಸಮಾರಂಭದಲ್ಲಿ ಶಕುಂತಲಾ ತಟ್ಟಿ, ಕುಸುಮಾ ಮಲ್ಲಾಡದ, ನೀಲಕ್ಕ ಬೂದಿಹಾಳ, ಕಾಂಚನಮಾಲಾ ಹಸರೆಡ್ಡಿ, ಲತಾ ಎಸ್. ತಟ್ಟಿ, ಅರುಂಧತಿ ಬಿಂಕದಕಟ್ಟಿ, ನಿರ್ಮಲಾ ಅರಳಿ, ಶಾಂತಾ ಗುಳಗಣ್ಣವರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ವಚನಗಳ ವೈಚಾರಿಕ ಪರಂಪರೆ, ಮಹಿಳಾ ಸಮಾನತೆಯ ಆಶಯ ಹಾಗೂ ಸಾಮಾಜಿಕ ನ್ಯಾಯದ ಸಂದೇಶಗಳ ಕುರಿತು ಚಿಂತನ-ಮಂಥನ ನಡೆಯಿತು. ವಚನಕಾರ್ತಿಯರ ವಿಚಾರಧಾರೆ ಇಂದಿನ ಸಮಾಜದಲ್ಲಿ ಮತ್ತಷ್ಟು ಪ್ರಸ್ತುತವಾಗಿದ್ದು, ಅವರ ಸಂದೇಶಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳುವ ಅಗತ್ಯವನ್ನು ಗಣ್ಯರು ಪ್ರತಿಪಾದಿಸಿದರು.

ಪೂಜ್ಯ ಶ್ರೀ ಸಿದ್ದೇಶ್ವರ ಸತ್ಸಂಗ ಬಳಗ, ಗದಗ ಜಿಲ್ಲಾ ಹಾಗೂ ಲಕ್ಷ್ಮೇಶ್ವರ ತಾಲೂಕು ಶರಣ ಸಾಹಿತ್ಯ ಪರಿಷತ್ತು, ಕದಳಿ ಮಹಿಳಾ ವೇದಿಕೆ, ರಾಜ-ರಾಜೇಶ್ವರಿ ಮಹಿಳಾ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ, ಅಕ್ಕಮಹಾದೇವಿ ಬಳಗ, ಪ್ರೇಮಕ್ಕಾ ಅಭಿಮಾನ ಬಳಗ ಹಾಗೂ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಕಾರ್ಯಕ್ರಮ ಅರ್ಥಪೂರ್ಣವಾಗಿ ಜರುಗಿತು.

ಮಹಿಳಾ ಸಾಹಿತ್ಯವನ್ನು ಕೇವಲ ಮಹಿಳೆಯರ ಸಾಹಿತ್ಯವೆಂದು ಸೀಮಿತಗೊಳಿಸದೆ, ಅದು ಸಮಾಜದ ಸಮಗ್ರ ಚಿಂತನೆಯ ಭಾಗ ಎಂಬ ಅರಿವು ಮೂಡಿಸಬೇಕು.
— ಪ್ರತಿಮಾ ಮಹಾಜನಶೆಟ್ಟರ

ಕಾಂಗ್ರೆಸ್ ಸಂಪುಟದಲ್ಲಿ ‘ಭ್ರಷ್ಟರ ದರ್ಬಾರ್’: ವಿಜಯಕುಮಾರ ಗಡ್ಡಿ

0

ವಿಜಯಸಾಕ್ಷಿ ಸುದ್ದಿ, ಗದಗ: ಹಲವು ಸುತ್ತಿನ ಕಸರತ್ತು, ಚರ್ಚೆಗಳ ಬಳಿಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಸಚಿವ ಸಂಪುಟ ವಿಸ್ತರಣೆ ಮಾಡಿದ್ದು, ಹೊಸ ಸಂಪುಟದಲ್ಲಿ ಭ್ರಷ್ಟಾಚಾರ ಹಾಗೂ ಅಸಮರ್ಥತೆಯ ಆರೋಪ ಎದುರಿಸುತ್ತಿರುವವರಿಗೇ ಮಣೆ ಹಾಕಲಾಗಿದೆ ಎಂದು ಬಿಜೆಪಿ ಮುಖಂಡ ಹಾಗೂ ಉದ್ಯಮಿದಾರ ವಿಜಯಕುಮಾರ ಗಡ್ಡಿ ಆರೋಪಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ವಾಲ್ಮೀಕಿ ನಿಗಮದ ಹಣ ದುರುಪಯೋಗ ಪ್ರಕರಣದಲ್ಲಿ ₹187 ಕೋಟಿ ಅಕ್ರಮದ ಆರೋಪ ಎದುರಿಸಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಬಿ. ನಾಗೇಂದ್ರ ಅವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರಿಸಿಕೊಂಡಿರುವುದು ಕಾಂಗ್ರೆಸ್ ಸರ್ಕಾರದ ನಾಚಿಕೆಗೇಡಿತನಕ್ಕೆ ಸಾಕ್ಷಿ ಎಂದು ಟೀಕಿಸಿದ್ದಾರೆ.

“ಇಡೀ ರಾಜ್ಯದ ಜನರು ಛೀಮಾರಿ ಹಾಕಿದರೂ ಆರೋಪ ಎದುರಿಸುತ್ತಿರುವವರನ್ನೇ ಮತ್ತೆ ಸಂಪುಟಕ್ಕೆ ಸೇರಿಸಿಕೊಳ್ಳುತ್ತಿರುವುದು ಕಾಂಗ್ರೆಸ್ ಸರ್ಕಾರದ ನಡೆ ಎಷ್ಟು ಗಂಭೀರವಾಗಿದೆ ಎಂಬುದನ್ನು ತೋರಿಸುತ್ತದೆ.”
— ವಿಜಯಕುಮಾರ ಗಡ್ಡಿ, ಬಿಜೆಪಿ ಮುಖಂಡ ಹಾಗೂ ಉದ್ಯಮಿದಾರ

ಕಾರ್ಮಿಕ ಇಲಾಖೆಯ ಕಲ್ಯಾಣ ನಿಧಿ ದುರುಪಯೋಗ ಹಾಗೂ ಹೆಲ್ತ್ ಕಿಟ್‌ ಹಗರಣಕ್ಕೆ ಸಂಬಂಧಿಸಿದಂತೆ ಆರೋಪಗಳು ಕೇಳಿಬಂದಿದ್ದರೂ ಸಂತೋಷ್ ಲಾಡ್ ಅವರನ್ನು ಮತ್ತೆ ಕಾರ್ಮಿಕ ಸಚಿವರನ್ನಾಗಿ ನೇಮಕ ಮಾಡಿರುವುದು ರಾಜ್ಯದ ಜನರ ದೌರ್ಭಾಗ್ಯ ಎಂದು ಅವರು ಟೀಕಿಸಿದ್ದಾರೆ.

ದುಡ್ಡು ನೀಡಿದವರಿಗೆ ಮಾತ್ರ ಮನೆ ಎಂಬ ರೀತಿಯಲ್ಲಿ ‘ಮನಿ ಇದ್ದರೆ ಮಾತ್ರ ಮನೆ’ ಎಂಬ ಆರೋಪಕ್ಕೆ ಗುರಿಯಾಗಿದ್ದ ಜಮೀರ್ ಅಹ್ಮದ್ ಖಾನ್ ಅವರಿಗೆ ಮತ್ತೆ ವಸತಿ ಖಾತೆ ನೀಡಿರುವುದನ್ನು ಪ್ರಶ್ನಿಸಿರುವ ಗಡ್ಡಿ, ಇದರಿಂದ ಕಾಂಗ್ರೆಸ್ ಸರ್ಕಾರಕ್ಕೆ ಆತ್ಮಗೌರವವೇ ಇಲ್ಲ ಎಂಬುದು ಸ್ಪಷ್ಟವಾಗುತ್ತದೆ ಎಂದು ಹೇಳಿದ್ದಾರೆ.

ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪೂರ್ವಭಾವಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯ ಕಾರ್ಯವೈಖರಿ ಕುರಿತು ಟೀಕೆಗಳು ಕೇಳಿಬಂದಿದ್ದರೂ ಎಸ್.ಎಸ್. ಮಧು ಬಂಗಾರಪ್ಪ ಅವರಿಗೆ ಮತ್ತೆ ಶಿಕ್ಷಣ ಖಾತೆ ನೀಡಿರುವುದು ರಾಜ್ಯದ ಸುಶಿಕ್ಷಿತರಿಗೆ ತಲೆತಗ್ಗಿಸುವಂತಾಗಿದೆ ಎಂದು ಆರೋಪಿಸಿದ್ದಾರೆ.

ಕಾಂಗ್ರೆಸ್ ಸರ್ಕಾರದ ಆಡಳಿತ ಹಾಗೂ ಸಚಿವ ಸಂಪುಟದ ಬೆಳವಣಿಗೆಗಳನ್ನು ರಾಜ್ಯದ ಜನರು ಗಮನಿಸುತ್ತಿದ್ದಾರೆ. 2028ರ ವಿಧಾನಸಭಾ ಚುನಾವಣೆಯಲ್ಲಿ ಈ ಸರ್ಕಾರವನ್ನು ಕಿತ್ತೊಗೆಯಲು ಜನರು ಉತ್ಸುಕರಾಗಿದ್ದಾರೆ ಎಂದು ವಿಜಯಕುಮಾರ ಗಡ್ಡಿ ತಿಳಿಸಿದ್ದಾರೆ.

ಯುವ ಸಂಕಲ್ಪದಿಂದಲೇ ನವ ಭಾರತ ನಿರ್ಮಾಣ ಸಾಧ್ಯ: ಕಿರಣ ರಾಮ್

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಭಾರತದ ಭವಿಷ್ಯವನ್ನು ರೂಪಿಸುವಲ್ಲಿ ಯುವಜನತೆಯ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಯುವಕರು ತಮ್ಮ ಜ್ಞಾನ, ಪ್ರತಿಭೆ, ಶಕ್ತಿ ಹಾಗೂ ಸೃಜನಶೀಲತೆಯನ್ನು ದೇಶದ ಅಭಿವೃದ್ಧಿಗೆ ಸಮರ್ಪಿಸುವ ಸಂಕಲ್ಪ ಮಾಡಬೇಕು. ಯುವಕರಲ್ಲಿ ರಾಷ್ಟ್ರಪ್ರೇಮ, ಸಾಮಾಜಿಕ ಜವಾಬ್ದಾರಿ, ಸೇವಾ ಮನೋಭಾವ ಹಾಗೂ ನಾಯಕತ್ವದ ಗುಣಗಳನ್ನು ಬೆಳೆಸುವ ಮೂಲಕ ನವ ಭಾರತದ ನಿರ್ಮಾಣದ ಕನಸನ್ನು ನನಸಾಗಿಸಬಹುದು ಎಂದು ಶಿಕ್ಷಕ ಹಾಗೂ ವಾಗ್ಮಿ ಕಿರಣ ರಾಮ್ ಹೇಳಿದರು.

ಪಟ್ಟಣದ ಶ್ರೀಮತಿ ಕಮಲಾ ಮತ್ತು ಶ್ರೀ ವೆಂಕಪ್ಪ ಎಂ. ಅಗಡಿ ಇಂಜಿನಿಯರಿಂಗ್ ಮಹಾವಿದ್ಯಾಲಯದಲ್ಲಿ ಎನ್‌ಎಸ್‌ಎಸ್ ಘಟಕದ 2026–27ನೇ ಸಾಲಿನ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ಭಾರತ ಅಪಾರ ಯುವಶಕ್ತಿಯನ್ನು ಹೊಂದಿರುವ ರಾಷ್ಟ್ರವಾಗಿದೆ. ಈ ಶಕ್ತಿಯನ್ನು ಸಕಾರಾತ್ಮಕವಾಗಿ ಬಳಸಿಕೊಳ್ಳುವುದು ವ್ಯಕ್ತಿತ್ವ ನಿರ್ಮಾಣದ ಜತೆಗೆ ರಾಷ್ಟ್ರ ನಿರ್ಮಾಣಕ್ಕೂ ಅಗತ್ಯವಾಗಿದೆ ಎಂದರು.

ಗುಣಮಟ್ಟದ ಶಿಕ್ಷಣದ ಜತೆಗೆ ಕೌಶಲ್ಯಾಭಿವೃದ್ಧಿ, ನವೋದ್ಯಮ, ಉದ್ಯಮಶೀಲತೆ, ತಂತ್ರಜ್ಞಾನ ಜ್ಞಾನ, ಪರಿಸರ ಸಂರಕ್ಷಣೆ ಹಾಗೂ ಸಾಮಾಜಿಕ ಸೇವೆಯಲ್ಲಿ ಯುವಕರು ತೊಡಗಿಸಿಕೊಳ್ಳಬೇಕು. ಜ್ಞಾನ ಮತ್ತು ಪ್ರತಿಭೆಯನ್ನು ಸಮಾಜದ ಅಭಿವೃದ್ಧಿಗೆ ಬಳಸುವ ಮೂಲಕ ದೇಶದ ಪ್ರಗತಿಗೆ ತಮ್ಮದೇ ಆದ ಕೊಡುಗೆ ನೀಡಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಪರಶುರಾಮ ಬಾರಕಿ ಮಾತನಾಡಿ, ಸ್ವಚ್ಛತೆ, ಪರಿಸರ ಸಂರಕ್ಷಣೆ, ರಕ್ತದಾನ, ಗ್ರಾಮೀಣ ಅಭಿವೃದ್ಧಿ, ಸಾಕ್ಷರತೆ, ಸಾಮಾಜಿಕ ಜಾಗೃತಿ, ರಾಷ್ಟ್ರೀಯ ಏಕತೆ ಸೇರಿದಂತೆ ವಿವಿಧ ಸೇವಾ ಚಟುವಟಿಕೆಗಳಲ್ಲಿ ಯುವಕರು ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದರು.

ಎನ್‌ಎಸ್‌ಎಸ್ ಘಟಕವು ಯುವಕರಲ್ಲಿ ಸ್ವಯಂಸೇವಾ ಮನೋಭಾವ, ನಾಯಕತ್ವ, ಅನುಭವಾಧಾರಿತ ಕಲಿಕೆ ಹಾಗೂ ಸಾಮಾಜಿಕ ಜವಾಬ್ದಾರಿಯ ಅರಿವು ಮೂಡಿಸಲು ಉತ್ತಮ ವೇದಿಕೆಯಾಗಿದೆ. ಜ್ಞಾನ, ಕೌಶಲ್ಯ ಮತ್ತು ಮೌಲ್ಯಗಳ ಸಮನ್ವಯವೇ ಯುವ ಸಂಕಲ್ಪದ ಆಧಾರ. ಪ್ರಾಮಾಣಿಕತೆ, ಶಿಸ್ತು, ಸಮಯಪಾಲನೆ, ಪರಿಶ್ರಮ, ಸಹಬಾಳ್ವೆ, ಮಾನವೀಯತೆ ಹಾಗೂ ದೇಶಪ್ರೇಮವನ್ನು ಜೀವನದಲ್ಲಿ ಅಳವಡಿಸಿಕೊಂಡ ಯುವಜನತೆ ಬಲಿಷ್ಠ ಸಮಾಜದ ನಿರ್ಮಾತೃಗಳಾಗುತ್ತಾರೆ ಎಂದು ಹೇಳಿದರು.

ಸಮಾರಂಭದಲ್ಲಿ ಮಹಾವಿದ್ಯಾಲಯದ ಆಡಳಿತಾಧಿಕಾರಿ ಪ್ರೊ. ವಿಕ್ರಂ ಶಿರೋಳ್, ಪ್ರಥಮ ವರ್ಷದ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಡಾ. ಗಿರೀಶ್ ಯತ್ತಿನಹಳ್ಳಿ, ಪ್ರೊ. ದಯಾನಂದ ಬಡಿಗಣ್ಣವರ, ಎನ್‌ಎಸ್‌ಎಸ್ ಅಧಿಕಾರಿ ಪ್ರೊ. ಸೋಮಶೇಖರ ಕೆರಿಮನಿ, ಪ್ರೊ. ಷಣ್ಮುಖ ಜಿ. ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಪ್ರಥಮ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಗಳನ್ನು ಎನ್‌ಎಸ್‌ಎಸ್ ಘಟಕಕ್ಕೆ ಸ್ವಾಗತಿಸಲಾಯಿತು. ಸ್ವಯಂಸೇವಕರಾದ ಅಭಿಷೇಕ ಕಣವಿ, ಶ್ರೀಲಕ್ಷ್ಮಿ ಪಾಟೀಲ್, ಸ್ಮಿತಾ ದಳವಾಯಿ, ಅಕ್ಷತಾ ಹಡಪದ ಹಾಗೂ ಚೇತನ್ ಗಣೇಶ್ ಬನ್ನಿಮಟ್ಟಿ ಕಾರ್ಯಕ್ರಮ ನಿರ್ವಹಿಸಿದರು.

ನಾನು ಬದಲಾಗುತ್ತೇನೆ–ಸಮಾಜವನ್ನು ಬದಲಾಯಿಸುತ್ತೇನೆ ಎಂಬ ಸಂಕಲ್ಪದೊಂದಿಗೆ ಯುವಕರು ಮುನ್ನಡೆಯಬೇಕು. ತಮ್ಮ ಸಾಮರ್ಥ್ಯವನ್ನು ವೈಯಕ್ತಿಕ ಯಶಸ್ಸಿಗೆ ಮಾತ್ರ ಸೀಮಿತಗೊಳಿಸದೆ ಸಮಾಜದ ಒಳಿತಿಗೂ ಬಳಸಿದಾಗ ಯುವಶಕ್ತಿಯ ನಿಜವಾದ ಅರ್ಥ ಸಾರ್ಥಕವಾಗುತ್ತದೆ.
— ಕಿರಣ ರಾಮ್, ಶಿಕ್ಷಕ ಹಾಗೂ ವಾಗ್ಮಿ

ಕಡತದ ಹಿಂದೆ ಇರುವ ನೋವನ್ನು ಅರ್ಥಮಾಡಿಕೊಳ್ಳಿ: ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್

0

ವಿಜಯಸಾಕ್ಷಿ ಸುದ್ದಿ, ಗದಗ: ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿ ‘ಸರ್ಕಾರಿ ಕೆಲಸ ದೇವರ ಕೆಲಸ’ ಎಂಬುದನ್ನು ಅಕ್ಷರಶಃ ಪಾಲಿಸುವ ಮೂಲಕ ಸಾರ್ವಜನಿಕರೊಂದಿಗೆ ಸೌಜನ್ಯ, ಪ್ರಾಮಾಣಿಕತೆ ಮತ್ತು ಮಾನವೀಯತೆಯಿಂದ ವರ್ತಿಸಬೇಕು. ಜನರ ಸಮಸ್ಯೆಗಳನ್ನು ಕೇವಲ ಕಡತ, ಅರ್ಜಿ ಅಥವಾ ದಾಖಲೆಗಳಾಗಿ ನೋಡದೆ, ಅವುಗಳ ಹಿಂದೆ ಇರುವ ನೋವು, ಸಂಕಷ್ಟ ಹಾಗೂ ಅಗತ್ಯವನ್ನು ಅರ್ಥಮಾಡಿಕೊಂಡು ಸ್ಪಂದಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಕರೆ ನೀಡಿದರು.

ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿ ಶನಿವಾರ ನಡೆದ 80ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಸರ್ಕಾರಿ ಸೇವೆಯ ಮಹತ್ವ, ಅಧಿಕಾರಿಗಳ ಜವಾಬ್ದಾರಿ ಹಾಗೂ ಜನಸ್ನೇಹಿ ಆಡಳಿತದ ಅಗತ್ಯವನ್ನು ಒತ್ತಿ ಹೇಳಿದರು.

ಭಾರತಕ್ಕೆ ಸ್ವಾತಂತ್ರ್ಯ ದೊರೆತ ಐತಿಹಾಸಿಕ ಸಂದರ್ಭವನ್ನು ಸ್ಮರಿಸಿದ ಜಿಲ್ಲಾಧಿಕಾರಿ, ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನ ಹಾಗೂ ದೇಶ ನಿರ್ಮಾಣಕ್ಕಾಗಿ ಅಂದಿನ ವಿದ್ವಾಂಸರು ಮತ್ತು ಪಂಡಿತರು ನೀಡಿದ ಸಲಹೆ-ಸೂಚನೆಗಳನ್ನು ನೆನಪಿಸಿಕೊಂಡರು.

ದೇಶ ನಿರ್ಮಾಣದ ಕಾರ್ಯದಲ್ಲಿ ದೇಶಭಕ್ತಿ, ಕರ್ತವ್ಯನಿಷ್ಠೆ ಹಾಗೂ ದೈವಬಲದ ಮೇಲಿನ ನಂಬಿಕೆ ಪ್ರತಿಯೊಬ್ಬರಲ್ಲೂ ಇರಬೇಕು. ಸರ್ಕಾರಿ ನೌಕರಿ ದೊರೆಯುವುದು ಕೇವಲ ಉದ್ಯೋಗವಲ್ಲ, ಅದು ದೊಡ್ಡ ಅವಕಾಶದ ಜೊತೆಗೆ ಮಹತ್ವದ ಜವಾಬ್ದಾರಿಯಾಗಿದೆ. ಕೋಟ್ಯಂತರ ಜನಸಂಖ್ಯೆಯಲ್ಲಿ ಕೆಲವೇ ಲಕ್ಷ ಮಂದಿಗೆ ಸರ್ಕಾರಿ ಸೇವೆ ಸಲ್ಲಿಸುವ ಅವಕಾಶ ದೊರೆತಿದೆ. ಹೀಗಾಗಿ, ‘ಸಮಾಜ ನಮಗೆ ಏನು ಕೊಟ್ಟಿದೆ?’ ಎನ್ನುವುದಕ್ಕಿಂತ ‘ಸಮಾಜಕ್ಕೆ ನಾವು ಏನು ಕೊಟ್ಟಿದ್ದೇವೆ?’ ಎಂದು ಪ್ರತಿಯೊಬ್ಬ ಸರ್ಕಾರಿ ನೌಕರರೂ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದರು.

ತಮ್ಮ ಸಮಸ್ಯೆಗಳನ್ನು ಹೊತ್ತು ಸರ್ಕಾರಿ ಕಚೇರಿಗಳಿಗೆ ಬರುವ ಸಾರ್ವಜನಿಕರೊಂದಿಗೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಸೌಜನ್ಯದಿಂದ ವರ್ತಿಸಬೇಕು. ಜನರೊಂದಿಗೆ ನಾಲ್ಕು ಹಿತನುಡಿಗಳನ್ನು ಆಡಿದರೂ ಅವರ ಅರ್ಧ ಸಮಸ್ಯೆ ಪರಿಹಾರವಾದಂತಾಗುತ್ತದೆ. ಸಾರ್ವಜನಿಕರ ಸಮಸ್ಯೆಗಳನ್ನು ತಾಳ್ಮೆಯಿಂದ ಆಲಿಸಿ, ಸಾಧ್ಯವಾದಷ್ಟು ಶೀಘ್ರವಾಗಿ ಸ್ಪಂದಿಸುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.

“ಸಾರ್ವಜನಿಕರ ದೃಷ್ಟಿಯಲ್ಲಿ ಪ್ರತಿಯೊಬ್ಬ ಸರ್ಕಾರಿ ನೌಕರನೂ ಸರ್ಕಾರದ ಪ್ರತಿನಿಧಿ. ನೌಕರರು ಮಾಡುವ ಸಣ್ಣ ಸಹಾಯವೂ ಸರ್ಕಾರದ ಮೇಲಿನ ಜನರ ನಂಬಿಕೆಯನ್ನು ಹೆಚ್ಚಿಸುತ್ತದೆ.” ಎಂದು ಅವರು ಹೇಳಿದರು.

ಜನರ ಸಮಸ್ಯೆಗಳನ್ನು ಕೇವಲ ಕಡತ, ಅರ್ಜಿ ಅಥವಾ ದಾಖಲೆಗಳ ರೂಪದಲ್ಲಿ ನೋಡಬಾರದು. ಆ ಕಡತದ ಹಿಂದೆ ಒಬ್ಬ ವ್ಯಕ್ತಿಯ ನೋವು, ಸಂಕಷ್ಟ ಮತ್ತು ಅಗತ್ಯವಿರುತ್ತದೆ. ಅದನ್ನು ಅರ್ಥಮಾಡಿಕೊಂಡು ಮಾನವೀಯತೆಯಿಂದ ಸ್ಪಂದಿಸುವ ಮನೋಭಾವ ಅಧಿಕಾರಿಗಳು ಹಾಗೂ ಸಿಬ್ಬಂದಿಯಲ್ಲಿ ಇರಬೇಕು ಎಂದು ಸಿ.ಎನ್. ಶ್ರೀಧರ್ ಹೇಳಿದರು.

ಅಧಿಕಾರ ಮತ್ತು ಹುದ್ದೆಯನ್ನು ಜನಸೇವೆಗೆ ಬಳಸಿಕೊಳ್ಳಬೇಕು. ಜನರ ಸೇವೆ ಮಾಡುವ ಮೂಲಕ ಪುಣ್ಯ ಸಂಪಾದಿಸುವ ಅಪೂರ್ವ ಅವಕಾಶ ಸರ್ಕಾರಿ ಸೇವೆಯಲ್ಲಿದೆ. ಸಮಾಜದಿಂದ ಪಡೆಯುವುದಕ್ಕಿಂತ ಸಮಾಜಕ್ಕೆ ನೀಡುವುದರಲ್ಲಿ ಹೆಚ್ಚಿನ ಸಂತೃಪ್ತಿ ದೊರೆಯುತ್ತದೆ ಎಂದರು.

ದೇಶದ ಅಭಿವೃದ್ಧಿ ಹಾಗೂ ಜನಕಲ್ಯಾಣಕ್ಕಾಗಿ ಪ್ರತಿಯೊಬ್ಬ ಸರ್ಕಾರಿ ನೌಕರರೂ ಪ್ರಾಮಾಣಿಕತೆ, ಕರ್ತವ್ಯನಿಷ್ಠೆ, ಸೌಜನ್ಯ ಮತ್ತು ಮಾನವೀಯತೆಯಿಂದ ಕಾರ್ಯನಿರ್ವಹಿಸುವ ಸಂಕಲ್ಪ ಮಾಡಬೇಕು ಎಂದು ಜಿಲ್ಲಾಧಿಕಾರಿ ಕರೆ ನೀಡಿದರು.

ಜಿಲ್ಲಾಡಳಿತದ ಆವರಣದಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್., ಜಿಲ್ಲಾ ಪಂಚಾಯಿತಿ ಕಾರ್ಯದರ್ಶಿ ಎಸ್.ಎಸ್. ಮುಂಡರಗಿ, ಸರ್ಕಾರಿ ನೌಕರರ ಜಿಲ್ಲಾಧ್ಯಕ್ಷ ಡಾ. ಬಸವರಾಜ ಬಳ್ಳಾರಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸರ್ಕಾರಿ ನೌಕರರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

ನಮ್ಮಲ್ಲಿ ಮನುಷ್ಯತ್ವ ತುಂಬಿದ್ದರೆ, ನಾವು ಮಾಡುವ ಪ್ರತಿಯೊಂದು ಕೆಲಸದಲ್ಲೂ ಅದು ಪ್ರತಿಫಲಿಸುತ್ತದೆ. ಸರ್ಕಾರ ನಮಗೆ ನೀಡಿರುವ ಅಧಿಕಾರವನ್ನು ಸಮಾಜಕ್ಕೆ ಮರುಪಾವತಿ ಮಾಡುವ ಸೇವಾ ಮನೋಭಾವದಿಂದ ಬಳಸಿಕೊಳ್ಳೋಣ.
— ಸಿ.ಎನ್. ಶ್ರೀಧರ್, ಜಿಲ್ಲಾಧಿಕಾರಿ

ಬಿಜೆಪಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ

0

ವಿಜಯಸಾಕ್ಷಿ ಸುದ್ದಿ, ಗದಗ: ಭಾರತದ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಗದಗ ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಭಾರತದ ಸ್ವಾತಂತ್ರ್ಯಕ್ಕಾಗಿ ಅನೇಕ ಮಹನೀಯರು ತಮ್ಮ ಜೀವನವನ್ನೇ ತ್ಯಾಗ ಮಾಡಿ ಬಲಿದಾನಗೈದಿದ್ದಾರೆ. ಅಂತಹ ಮಹನೀಯರ ತ್ಯಾಗ, ಬಲಿದಾನದಿಂದಲೇ ನಮಗೆ ಸ್ವಾತಂತ್ರ್ಯ ದೊರೆತಿದೆ. ಇಂದು ಭಾರತ ವಿಶ್ವದ ನಾಲ್ಕನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಿದ್ದು, 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸುತ್ತಿದೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ಈ ಸಂದರ್ಭದಲ್ಲಿ ಬಿಜೆಪಿ ಗದಗ ಜಿಲ್ಲಾಧ್ಯಕ್ಷ ತೋಟಪ್ಪ (ರಾಜು) ಕುರುಡಗಿ, ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ, ಮುಖಂಡರಾದ ಎಂ.ಎಸ್. ಕರೀಗೌಡ್ರ, ಲಿಂಗರಾಜ ಪಾಟೀಲ, ಸುರೇಶ ಮರಳಪ್ಪನವರ, ಅಶೋಕ ನವಲಗುಂದ, ಜಗನ್ನಾಥಸಾ ಭಾಂಡಗೆ, ಬಿ.ಎಚ್. ಲದ್ವಾ, ಎಂ.ಎಂ. ಹಿರೇಮಠ, ಸಿದ್ದು ಪಲ್ಲೇದ, ವಿಜಯಕುಮಾರ ಗಡ್ಡಿ, ರವಿ ದಂಡಿನ, ಸುಧೀರ ಕಾಟಿಗರ, ಶಂಕರ ಕಾಕಿ, ಸಂತೋಷ ಅಕ್ಕಿ, ನಿಂಗಪ್ಪ ಹುಗ್ಗಿ, ಸುಭಾಸ ಸುಂಕದ, ಮಂಜುನಾಥ ಹಳ್ಳೂರಮಠ, ಕೆ.ಪಿ. ಕೋಟಿಗೌಡ್ರ, ಅನೀಲ ಅಬ್ಬಿಗೇರಿ, ಶಿವು ಹಿರೇಮನಿಪಾಟೀಲ, ಪ್ರಶಾಂತ ನಾಯ್ಕರ, ದೇವಪ್ಪ ಗೊಟೂರ, ಅಮರನಾಥ ಬೆಟಗೇರಿ, ರಮೇಶ ಸಜ್ಜಗಾರ, ಮಾದವ ಗಣಾಚಾರಿ, ಕಿರಣ ಭೂಮಾ, ಜಯಶ್ರೀ ಉಗಲಾಟದ, ನಿರ್ಮಲಾ ಕೊಳ್ಳಿ, ಸ್ವಾತಿ ಅಕ್ಕಿ, ವಂದನಾ ವರ್ಣೇಕರ, ಶಾರದಾ ಸಜ್ಜನರ, ಅಶ್ವೀನಿ ಜಗತಾಪ್, ಪದ್ಮನಿ ಮುತ್ತಲದಿನ್ನಿ, ಮೇಘಾ ಕೊಟ್ಟೂರ, ಪ್ರೀತಿ ಶಿವಪ್ಪನಮಠ, ರವಿ ಮಾನ್ವಿ, ಅಕ್ಕಮ್ಮ ವಸ್ತçದ, ವಿನೋದ ಹಂಸನೂರ, ಮಂಜುನಾಥ ಪಟ್ಟಣಶೆಟ್ಟಿ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

‘ಗದಗ ಉತ್ಸವ’ ಉತ್ಪನ್ನ, ಉದ್ಯಮ ಸಾಮರ್ಥ್ಯದ ಕನ್ನಡಿ: ಜಿ.ಕೆ. ಆದಪ್ಪಗೌಡ್ರ

0

ವಿಜಯಸಾಕ್ಷಿ ಸುದ್ದಿ, ಗದಗ: ‘ಗದಗ ಉತ್ಸವ’ ಕೇವಲ ಕೈಗಾರಿಕಾ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳವಲ್ಲ. ಇದು ಗದಗ, ರಾಜ್ಯ ಹಾಗೂ ಅಂತರ್‌ರಾಜ್ಯದ ಉತ್ಪನ್ನಗಳು ಮತ್ತು ಉದ್ಯಮಗಳ ಸಾಮರ್ಥ್ಯವನ್ನು ಜಗತ್ತಿಗೆ ಪರಿಚಯಿಸುವ ಹಾಗೂ ಅವುಗಳಿಗೆ ಮಾರುಕಟ್ಟೆ ಒದಗಿಸುವ ವೇದಿಕೆಯಾಗಿದೆ ಎಂದು ಹುಬ್ಬಳ್ಳಿಯ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಅಧ್ಯಕ್ಷ ಜಿ.ಕೆ. ಆದಪ್ಪಗೌಡ್ರ ಹೇಳಿದರು.

ನಗರದ ಎ.ಪಿ.ಎಂ.ಸಿ. ಯಾರ್ಡ್‌ನ ಸ್ವಾಮಿ ವಿವೇಕಾನಂದ ಸಭಾಭವನ ಹಾಗೂ ಕೆ.ಎಚ್. ಪಾಟೀಲ ಸಭಾಭವನದಲ್ಲಿ ಆ.14ರಿಂದ 18ರವರೆಗೆ ನಡೆಯಲಿರುವ ‘ಗದಗ ಉತ್ಸವ-2026’ ಕೈಗಾರಿಕಾ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಶುಕ್ರವಾರ ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ಕೃಷಿ ಹಾಗೂ ಕೃಷಿ ಉತ್ಪನ್ನಗಳ ಪ್ರಮುಖ ಮಾರುಕಟ್ಟೆಯಾಗಿರುವ ಗದಗ ಜಿಲ್ಲೆ ಇದೀಗ ವೇಗವಾಗಿ ಉದ್ಯಮೀಕರಣದತ್ತ ಸಾಗುತ್ತಿದೆ. ಪ್ರಮುಖ ವ್ಯಾಪಾರ ಕೇಂದ್ರವಾಗಿ ಬೆಳೆಯುತ್ತಿರುವ ಜಿಲ್ಲೆಯಲ್ಲಿ ಉದ್ಯೋಗ ಸೃಷ್ಟಿಯೂ ಹೆಚ್ಚಾಗುವ ಎಲ್ಲ ಅವಕಾಶಗಳಿವೆ ಎಂದರು.

ಗದಗ ಜಿಲ್ಲೆಯಲ್ಲಿ ಉಗ್ರಾಣ, ಶೀತಲ ಸರಕು ಸಂಗ್ರಹಣಾ ಘಟಕ, ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಹಾಗೂ ರಫ್ತು ಘಟಕಗಳನ್ನು ಸ್ಥಾಪಿಸಲು ಪೂರಕ ವಾತಾವರಣವಿದೆ. ಇಂತಹ ಅವಕಾಶಗಳನ್ನು ಸಮರ್ಪಕವಾಗಿ ಬಳಸಿಕೊಂಡರೆ ಜಿಲ್ಲೆಯ ತಲಾ ಆದಾಯ ಹಾಗೂ ಉದ್ಯೋಗ ಸೃಷ್ಟಿ ಹೆಚ್ಚಲಿದೆ ಎಂದು ಹೇಳಿದರು.

ಯುವಕರು ಉದ್ಯೋಗ ಅರಸಿ ಹೋಗುವವರಾಗದೆ, ಉದ್ಯೋಗ ನೀಡುವ ಉದ್ಯಮಿಗಳಾಗಬೇಕು. ಸಣ್ಣ, ಅತಿ ಸಣ್ಣ ಹಾಗೂ ಗುಡಿ ಕೈಗಾರಿಕೆಗಳಿಗೆ ಜಿಲ್ಲೆಯಲ್ಲಿ ಅಪಾರ ಅವಕಾಶಗಳಿವೆ ಎಂದು ಕರೆ ನೀಡಿದರು.

ಉದ್ಯಮಿಗಳು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಮಾತನಾಡಿದ ಅವರು, ಭೂಮಿಯ ಹೆಚ್ಚಿನ ಬೆಲೆ ಹಾಗೂ ಹಣಕಾಸಿನ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲು ಸರ್ಕಾರ ರಿಯಾಯಿತಿ ದರದಲ್ಲಿ ಕೈಗಾರಿಕಾ ನಿವೇಶನಗಳನ್ನು ಅಭಿವೃದ್ಧಿಪಡಿಸಿ ಹಂಚಿಕೆ ಮಾಡಬೇಕು. ಜಿಲ್ಲೆಯಲ್ಲಿ ವಿಶೇಷ ಆರ್ಥಿಕ ವಲಯ ಸ್ಥಾಪಿಸಿದರೆ ಆರ್ಥಿಕ ಅಭಿವೃದ್ಧಿಗೆ ಮತ್ತಷ್ಟು ವೇಗ ದೊರೆಯಲಿದೆ ಎಂದು ಒತ್ತಾಯಿಸಿದರು.

ಗದಗ ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆಯು ಸರ್ಕಾರದ ಸಹಯೋಗದಲ್ಲಿ ಶಾಶ್ವತ ವಸ್ತು ಪ್ರದರ್ಶನ ಕೇಂದ್ರ ನಿರ್ಮಿಸಲು ಮುಂದಾದರೆ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯಿಂದ ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ಭರವಸೆ ನೀಡಿದರು.

ವರ್ಷದಿಂದ ವರ್ಷಕ್ಕೆ ‘ಗದಗ ಉತ್ಸವ’ದ ವ್ಯಾಪ್ತಿ ಹಾಗೂ ವೈಭವ ಹೆಚ್ಚುತ್ತಿರುವುದು ಶ್ಲಾಘನೀಯ. ಇಂತಹ ಮೇಳಗಳಿಂದ ಸ್ಥಳೀಯ ಕೈಗಾರಿಕೆಗಳು, ಉತ್ಪನ್ನಗಳು ಮತ್ತು ಉದ್ಯಮಿಗಳು ಬೆಳೆಯಲು ಉತ್ತಮ ಅವಕಾಶ ದೊರೆಯುತ್ತದೆ ಎಂದರು.

ಗದಗದ ಸ್ವಾತಂತ್ರ್ಯ ಹೋರಾಟದ ಇತಿಹಾಸ ಅನನ್ಯ: ಸಚಿವ ಬಸವರಾಜ ರಾಯರಡ್ಡಿ

0

ವಿಜಯಸಾಕ್ಷಿ ಸುದ್ದಿ, ಗದಗ: ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಗದಗ ಜಿಲ್ಲೆಯ ಸ್ವಾತಂತ್ರ್ಯ ಸೇನಾನಿಗಳ ಪಾತ್ರ ಅನನ್ಯವಾಗಿದ್ದು, ಅವರ ತ್ಯಾಗ ಮತ್ತು ಬಲಿದಾನದಿಂದ ದೇಶಕ್ಕೆ ಸ್ವಾತಂತ್ರ್ಯ ದೊರೆತಿದೆ ಎಂದು ಉನ್ನತ ಶಿಕ್ಷಣ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ರಾಯರಡ್ಡಿ ಹೇಳಿದರು.

ಗದಗ ನಗರದ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದಿಂದ ಶನಿವಾರ ಆಯೋಜಿಸಿದ್ದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಸಾರ್ವಜನಿಕ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಗದಗ ಪರಿಸರದಲ್ಲಿ ನಡೆದ ಸ್ವಾತಂತ್ರ್ಯ ಹೋರಾಟದ ಇತಿಹಾಸ ರೋಚಕವಾಗಿದೆ. 1857ರಿಂದಲೇ ಜಿಲ್ಲೆಯಲ್ಲಿ ಸ್ವಾತಂತ್ರ್ಯ ಹೋರಾಟದ ಕಿಚ್ಚು ಹೊತ್ತಿಕೊಂಡಿತ್ತು. ನರಗುಂದದ ಬಾಬಾಸಾಹೇಬ, ಮುಂಡರಗಿಯ ಭೀಮರಾವ್, ಡಂಬಳದ ಕೆಂಚನಗೌಡ್ರ, ಅನಂತರಾವ್ ಜಾಲಿಹಾಳ, ಡಾ. ವಾಸುದೇವರಾವ್ ಉಮಚಗಿ, ಬೆಟಗೇರಿಯ ತ್ರಿಮಲ್ಲೆ, ಮಳೇಕರ, ಜಯರಾಮಾಚಾರ್ಯ ಮಳಗಿ, ಡಂಬಳದ ಶ್ರೀನಿವಾಸರಾವ್ ಕಳ್ಳಿ, ತಿಪ್ಪಣ್ಣ ಶಾಸ್ತ್ರಿ, ಅಂದಾನಪ್ಪ ದೊಡ್ಡಮೇಟಿ, ಕೌತಾಳ ವೀರಪ್ಪ, ಕೆ.ಎಚ್. ಪಾಟೀಲ ಸೇರಿದಂತೆ ಅಸಂಖ್ಯಾತ ಹೋರಾಟಗಾರರ ಕೊಡುಗೆ ಅವಿಸ್ಮರಣೀಯವಾಗಿದೆ ಎಂದರು.

ದೇಶಭಕ್ತ ಮೈಲಾರ ಮಹದೇವಪ್ಪ ಅವರ ನೇತೃತ್ವದಲ್ಲಿ ಕೋಗನೂರು, ಶಿಗ್ಲಿ, ಹೆಬ್ಬಾಳ, ನಾಗರಮಡುವು, ವರವಿ, ಹೊಸೂರು, ಅಂಕಲಿ ಸೇರಿದಂತೆ ಹಲವು ಗ್ರಾಮಗಳ ಹೋರಾಟಗಾರರು ಚಳವಳಿಯಲ್ಲಿ ಧುಮುಕಿ ಅಪಾರ ತ್ಯಾಗ ಮಾಡಿದ್ದಾರೆ. 1942ರ ‘ಭಾರತ ಬಿಟ್ಟು ತೊಲಗಿ’ ಚಳವಳಿಯಲ್ಲಿಯೂ ಗದಗ ಜಿಲ್ಲೆ ಸಂಪೂರ್ಣವಾಗಿ ತೊಡಗಿಸಿಕೊಂಡಿತ್ತು. ಡಾ. ಬಿ.ಜಿ. ಹುಲಗಿ, ಶಂಕ್ರಪ್ಪ ಗುಡ್ಡದ, ಇಸ್ಮಾಯಿಲ ಸಾಹೇಬ, ಕಲ್ಲೂರ ರಾಮಾಚಾರಿ, ವೆಂಕಟೇಶ ಮಾಗಡಿ, ಕೋಗನೂರ ನಿಂಗಪ್ಪ ಸೇರಿದಂತೆ ಅನೇಕರು ಕಠಿಣ ಶಿಕ್ಷೆ ಅನುಭವಿಸಿದರು ಎಂದು ಸ್ಮರಿಸಿದರು.

ಸಾಹಿತ್ಯ–ಸಂಸ್ಕೃತಿಯ ಶ್ರೀಮಂತ ಪರಂಪರೆ

ಗದಗ ಜಿಲ್ಲೆ ಸ್ವಾತಂತ್ರ್ಯ ಹೋರಾಟ ಮಾತ್ರವಲ್ಲದೆ ಸಾಹಿತ್ಯ, ಸಂಗೀತ, ಸಂಸ್ಕೃತಿ ಕ್ಷೇತ್ರದಲ್ಲಿಯೂ ಅಪಾರ ಕೊಡುಗೆ ನೀಡಿದೆ. ಪಂಪ, ನಾಗವರ್ಮ, ಕುಮಾರವ್ಯಾಸ, ಚಾಮರಸ, ಮುಕ್ತಾಯಕ್ಕರಿಂದ ಹಿಡಿದು ಕೀರ್ತಿನಾಥ ಕುರ್ತಕೋಟಿ, ಚನ್ನವೀರ ಕಣವಿ, ಗಿರಡ್ಡಿ ಗೋವಿಂದರಾಜ, ಎನ್.ಕೆ. ಕುಲಕರ್ಣಿ, ಮಾಧವ ಕುಲಕರ್ಣಿ, ಎಚ್.ಎನ್. ಹೂಗಾರ, ರಾಜಶೇಖರ ಭೂಸನೂರಮಠ, ಭಾರತರತ್ನ ಪಂಡಿತ ಭೀಮಸೇನ ಜೋಶಿ, ಪಂಚಾಕ್ಷರಿ ಗವಾಯಿಗಳು, ಡಾ. ಪುಟ್ಟರಾಜ ಕವಿ ಗವಾಯಿಗಳು ಹಾಗೂ ಡಾ. ತೋಂಟದ ಸಿದ್ಧಲಿಂಗ ಮಹಾಸ್ವಾಮಿಗಳವರೆಗೆ ಜಿಲ್ಲೆಯ ಸಾಧಕರ ಪರಂಪರೆ ದೊಡ್ಡದಾಗಿದೆ ಎಂದರು.

ರಾಜ್ಯ ಸರ್ಕಾರ ವಿವಿಧ ಹಂತಗಳಲ್ಲಿ ಸುಮಾರು ₹1.20 ಲಕ್ಷ ಕೋಟಿ ಮೊತ್ತದ ಸಬ್ಸಿಡಿ ನೀಡುತ್ತಿದೆ. ರಾಜ್ಯದ ಸುಮಾರು 36.10 ಲಕ್ಷ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್ ಒದಗಿಸಲಾಗುತ್ತಿದ್ದು, ರೈತರಿಗೆ ಶೂನ್ಯ ಬಡ್ಡಿದರದಲ್ಲಿ ₹5 ಲಕ್ಷದವರೆಗೆ ಸಾಲ ವಿತರಿಸಲಾಗುತ್ತಿದೆ ಎಂದರು.

ಗದಗ ಜಿಲ್ಲೆಯ ಕಪ್ಪತ್ತಗುಡ್ಡದ ನೈಸರ್ಗಿಕ ಸಂಪತ್ತನ್ನು ಸಂರಕ್ಷಿಸುವುದರ ಜೊತೆಗೆ ಪ್ರವಾಸೋದ್ಯಮ ಅಭಿವೃದ್ಧಿಗೂ ಆದ್ಯತೆ ನೀಡಲಾಗುವುದು. ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ಜಿಲ್ಲೆಯ ಹೆಮ್ಮೆಯಾಗಿದ್ದು, ಗ್ರಾಮೀಣಾಭಿವೃದ್ಧಿ ಕ್ಷೇತ್ರದಲ್ಲಿ ಶಿಕ್ಷಣ, ಸಂಶೋಧನೆ ಮತ್ತು ತರಬೇತಿಗೆ ಮಹತ್ವದ ಕೊಡುಗೆ ನೀಡುತ್ತಿದೆ ಎಂದು ಹೇಳಿದರು.

ಜಿಲ್ಲೆಯ ಐತಿಹಾಸಿಕ, ಸಾಂಸ್ಕೃತಿಕ ಹಾಗೂ ನೈಸರ್ಗಿಕ ವೈಶಿಷ್ಟ್ಯಗಳನ್ನು ಉಳಿಸಿಕೊಂಡು ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ಜಿಲ್ಲೆಯ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ಬಸವರಾಜ ರಾಯರಡ್ಡಿ ಭರವಸೆ ನೀಡಿದರು.

ಸಮಾರಂಭದ ಅಧ್ಯಕ್ಷತೆಯನ್ನು ಶಾಸಕ ಡಾ. ಎಚ್.ಕೆ. ಪಾಟೀಲ ವಹಿಸಿದ್ದರು. ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಚಿ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ. ಅಸೂಟಿ, ತಾಲೂಕು ಅಧ್ಯಕ್ಷ ಅಶೋಕ ಮಂದಾಲಿ, ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್, ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್., ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂತೋಷಕುಮಾರ್ ಕೆ., ಉಪವಿಭಾಗಾಧಿಕಾರಿ ಗಂಗಪ್ಪ ಎಂ., ಜಿ.ಪಂ. ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಜನಪ್ರತಿನಿಧಿಗಳು, ಗಣ್ಯರು, ಸಾರ್ವಜನಿಕರು ಹಾಗೂ ಅಪಾರ ಸಂಖ್ಯೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

“ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನದಿಂದ ನಮಗೆ ಸ್ವಾತಂತ್ರ್ಯ ಲಭಿಸಿದೆ. ಗದಗ ಜಿಲ್ಲೆಯ ಸ್ವಾತಂತ್ರ್ಯ ಸೇನಾನಿಗಳ ಹೋರಾಟ ಮತ್ತು ತ್ಯಾಗವನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ.”

ಬಸವರಾಜ ರಾಯರಡ್ಡಿ, ಉನ್ನತ ಶಿಕ್ಷಣ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರು

‘ನಾನು ಎಲ್ಲಿ ಸೈಲೆಂಟ್ ಆಗಿದ್ದೇನೆ?’; ಟೀಕಾಕಾರರಿಗೆ ಸಿದ್ದರಾಮಯ್ಯ ತಿರುಗೇಟು!

0

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚೆಗೆ ಸೈಲೆಂಟ್ ಆಗಿದ್ದಾರೆ ಎಂಬ ಚರ್ಚೆ ರಾಜಕೀಯ ವಲಯದಲ್ಲಿ ನಡೆಯುತ್ತಿರುವ ಬೆನ್ನಲ್ಲೇ, ಈ ಬಗ್ಗೆ ಸ್ವತಃ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. “ನಾನೀಗ ಮುಖ್ಯಮಂತ್ರಿ ಅಲ್ಲ, ಹಾಗಾಗಿ ಹೆಚ್ಚು ಮಾತನಾಡುತ್ತಿಲ್ಲ ಅಷ್ಟೇ” ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ, “ನಾನು ಎಲ್ಲಿ ಸೈಲೆಂಟ್ ಆಗಿದ್ದೇನೆ? ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದ್ದೇನೆ. ನಿನ್ನೆ ಅಧಿವೇಶನದಲ್ಲಿ ಭಾಗಿಯಾಗಿದ್ದೇನೆ. ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲೂ ಭಾಗಿಯಾಗಿದ್ದೇನೆ. ಆದರೆ ಹೆಚ್ಚು ಮಾತನಾಡುತ್ತಿಲ್ಲ ಅಷ್ಟೇ” ಎಂದು ಹೇಳಿದರು.

“ನಾನೀಗ ಮುಖ್ಯಮಂತ್ರಿ ಅಲ್ಲ. ಹಾಗಾಗಿ ಜವಾಬ್ದಾರಿ ಇಲ್ಲ” ಎಂದು ಹೇಳುವ ಮೂಲಕ ತಾವು ಮೌನವಾಗಿರುವುದಕ್ಕೆ ಕಾರಣವನ್ನು ಸಿದ್ದರಾಮಯ್ಯ ವಿವರಿಸಿದರು.

ಇನ್ನು ಮಹಿಳಾ ಕೋಟಾ ಭರ್ತಿಯಾಗಿಲ್ಲ ಎಂಬ ಬಿಜೆಪಿ ಆರೋಪದ ಬಗ್ಗೆಯೂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದರು. “ಮಹಿಳಾ ಕೋಟಾ ಭರ್ತಿಯಾಗಿಲ್ಲ ಎಂದು ಬಿಜೆಪಿಯವರು ಆರೋಪ ಮಾಡುತ್ತಾರೆ. ಈ ಬಗ್ಗೆ ಮಾತನಾಡಲು ಬಿಜೆಪಿಯವರಿಗೆ ಯಾವ ನೈತಿಕತೆ ಇದೆ? ಅವರ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಅವಕಾಶವನ್ನೇ ನೀಡಿಲ್ಲ” ಎಂದು ಟೀಕಿಸಿದರು.

ಮಹಿಳೆಯರಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕು ಎಂದು ತಾವು ಹೇಳಿರುವುದಾಗಿ ಸಿದ್ದರಾಮಯ್ಯ ಇದೇ ವೇಳೆ ತಿಳಿಸಿದರು.

ಅಹಿಂದ ಚಳುವಳಿ ಕುರಿತು ಮಾತನಾಡಿದ ಸಿದ್ದರಾಮಯ್ಯ, ಅಹಿಂದ ಚಳುವಳಿ ನಡೆಯುತ್ತಿದೆ. ಹಿಂದುಳಿದ ವರ್ಗಗಳ ಒಕ್ಕೂಟದ ವತಿಯಿಂದ 25ನೇ ವರ್ಷದ ಕಾರ್ಯಕ್ರಮ ಆಯೋಜಿಸಲಾಗಿದ್ದು, ಈ ಕಾರ್ಯಕ್ರಮದಲ್ಲಿ ತಾವು ಭಾಗವಹಿಸುವುದಾಗಿ ತಿಳಿಸಿದರು.