Home Blog

ಫಲವತ್ತಾದ ಭೂಮಿ ಉಳಿಸಲು ರೈತರ ಪ್ರತಿಭಟನೆ

0

ವಿಜಯಸಾಕ್ಷಿ ಸುದ್ದಿ, ಗದಗ: ಗದಗ ತಾಲೂಕಿನ ನರಸಾಪೂರ ಸರಹದ್ದಿನಲ್ಲಿ ಫಲವತ್ತಾದ ಕೃಷಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆಯನ್ನು ಕೈಬಿಡಬೇಕು ಹಾಗೂ ಹನಿ ನೀರಾವರಿ ಯೋಜನೆ ಹೆಸರಿನಲ್ಲಿ ರಾಜ್ಯ ಹೆದ್ದಾರಿಯಲ್ಲಿ ಕಾನೂನುಬಾಹಿರವಾಗಿ ಪೈಪ್‌ಲೈನ್ ಅಳವಡಿಸುತ್ತಿರುವುದನ್ನು ವಿರೋಧಿಸಿ ಜುಲೈ 17ರಂದು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ (ಎಚ್. ಶಿವರಾಮೇಗೌಡ ಬಣ) ಜಿಲ್ಲಾಧ್ಯಕ್ಷ ಎಂ.ಪಿ. ಪರ್ವತಗೌಡ್ರ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಟಗೇರಿ ಹೊರವಲಯದ ನಾಗಸಮುದ್ರ ಗ್ರಾಮದ ದಂಡಿನ ದುರ್ಗಾದೇವಿ ದೇವಸ್ಥಾನದ ಸಮೀಪ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ (ಎಚ್. ಶಿವರಾಮೇಗೌಡ ಬಣ) ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ಹೇಳಿದರು.

ಈಗಾಗಲೇ ನರಸಾಪೂರ ವ್ಯಾಪ್ತಿಯಲ್ಲಿ 160ಕ್ಕೂ ಹೆಚ್ಚು ಎಕರೆ ಭೂಮಿಯನ್ನು ಕೆಐಎಡಿಬಿ ಸ್ವಾಧೀನಪಡಿಸಿಕೊಂಡು ಕೈಗಾರಿಕೆ ಸ್ಥಾಪಿಸಿದೆ. ಇದೀಗ ಮತ್ತೆ 220 ಎಕರೆ ಫಲವತ್ತಾದ ಕೃಷಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ರೈತರಿಗೆ ನೋಟಿಸ್ ನೀಡಲಾಗಿದೆ. ಇದರಿಂದ ರೈತರ ಬದುಕು ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಉಂಟಾಗಲಿದ್ದು, ಸರ್ಕಾರ ತಕ್ಷಣವೇ ಭೂಸ್ವಾಧೀನ ಪ್ರಕ್ರಿಯೆಯನ್ನು ಕೈಬಿಡಬೇಕು. ಇಲ್ಲವಾದರೆ ಹೋರಾಟವನ್ನು ಮತ್ತಷ್ಟು ಉಗ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಜಿಲ್ಲಾಧ್ಯಕ್ಷ ವಿಜಯಕುಮಾರ ಸುಂಕದ ಮಾತನಾಡಿ, ಹನಿ ನೀರಾವರಿ ಕಾಮಗಾರಿಯ ಗುತ್ತಿಗೆದಾರರು ರಾಜ್ಯ ಹೆದ್ದಾರಿ ನಿಯಮಗಳನ್ನು ಉಲ್ಲಂಘಿಸಿ ಕಾಮಗಾರಿ ನಡೆಸುತ್ತಿದ್ದಾರೆ. ರಾಜ್ಯ ಹೆದ್ದಾರಿಯಿಂದ 40 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ಕಾಮಗಾರಿ ನಡೆಸಬಾರದು ಎಂಬ ನಿಯಮವಿದ್ದರೂ ಪೈಪ್‌ಲೈನ್ ಅಳವಡಿಸಲಾಗುತ್ತಿದೆ. ಇದಕ್ಕೆ ಲೋಕೋಪಯೋಗಿ ಇಲಾಖೆ ಅನುಮತಿ ನೀಡಿರುವುದು ಸರಿಯಾದ ಕ್ರಮವಲ್ಲ ಎಂದು ಆರೋಪಿಸಿದರು.

ನಾಗಸಮುದ್ರದ ಐತಿಹಾಸಿಕ ದಂಡಿನ ದುರ್ಗಾದೇವಿ ದೇವಸ್ಥಾನದ 150ಕ್ಕೂ ಹೆಚ್ಚು ವರ್ಷಗಳಷ್ಟು ಹಳೆಯ ಬೇವಿನ ಮರದ ಸಮೀಪ ಆಳವಾಗಿ ಗುಂಡಿ ತೋಡಿರುವುದರಿಂದ ಮರಕ್ಕೆ ಅಪಾಯ ಎದುರಾಗಿದ್ದು, ಭಕ್ತರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಪತ್ರಿಕಾಗೋಷ್ಠಿಯಲ್ಲಿ ರಾಜು ಬಾಳಿಕಾಯಿ, ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯ ಸಂಘಟನಾ ಕಾರ್ಯದರ್ಶಿ ಬಸಯ್ಯ ಗುಡ್ಡಿಮಠ, ಬಸವರಾಜ ಮುಳ್ಳಾಳ, ಬಸವರಾಜ ಹೊನ್ನಪ್ಪನವರ, ಮಂಜುನಾಥ ಹೊನ್ನಪ್ಪನವರ, ಅಪ್ಪಣ್ಣ ಕಾಳೆ, ಸುರೇಶ ಪೂಜಾರ, ಸುರೇಶ ನಿಂಗಪ್ಪ ಪೂಜಾರ, ಕೆಂಪಣ್ಣ ಪೂಜಾರ, ಪರಶುರಾಮ ಗಾಯಕವಾಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.

“ರೈತರ ಫಲವತ್ತಾದ ಭೂಮಿಯನ್ನು ಯಾವುದೇ ಕಾರಣಕ್ಕೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳಲು ಅವಕಾಶ ನೀಡುವುದಿಲ್ಲ. ರೈತರ ಬದುಕು ಉಳಿಸಲು ಅಗತ್ಯವಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುತ್ತೇವೆ.”

– ಎಂ.ಪಿ. ಪರ್ವತಗೌಡ್ರ, ಜಿಲ್ಲಾಧ್ಯಕ್ಷ, ಕರ್ನಾಟಕ ರಕ್ಷಣಾ ವೇದಿಕೆ (ಎಚ್. ಶಿವರಾಮೇಗೌಡ ಬಣ)

150 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

0

ವಿಜಯಸಾಕ್ಷಿ ಸುದ್ದಿ, ಗದಗ: ಸರ್ಕಾರಿ ಶಾಲೆಗಳ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಬಿ.ಜಿ. ಅಣ್ಣಿಗೇರಿ ಪ್ರತಿಷ್ಠಾನವು ಗದಗ ನಗರ ಹಾಗೂ ತಾಲೂಕಿನ ವಿವಿಧ ಸರ್ಕಾರಿ ಪ್ರೌಢಶಾಲೆಗಳ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಸುಮಾರು 150 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಿತು.

ಪ್ರತಿಷ್ಠಾನದ ಕಾರ್ಯದರ್ಶಿ ಸುಭಾಶ್ಚಂದ್ರ ಬೆಟದೂರ ಮಾತನಾಡಿ, ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರುತಿಸಿ ಗೌರವಿಸುವುದರಿಂದ ಅವರಲ್ಲಿ ಆತ್ಮವಿಶ್ವಾಸ ವೃದ್ಧಿಯಾಗುವುದರ ಜೊತೆಗೆ ಮತ್ತಷ್ಟು ಸಾಧನೆಗೆ ಪ್ರೇರಣೆಯಾಗುತ್ತದೆ. ಪ್ರತಿಭೆಯನ್ನು ಪ್ರೋತ್ಸಾಹಿಸುವ ಮೂಲಕ ಸಮಾಜದ ಭವಿಷ್ಯವನ್ನು ಸದೃಢಗೊಳಿಸುವುದು ಪ್ರತಿಷ್ಠಾನದ ಉದ್ದೇಶವಾಗಿದೆ ಎಂದು ಹೇಳಿದರು.

ಪ್ರತಿಷ್ಠಾನದ ಗೌರವಾಧ್ಯಕ್ಷ ಜ. ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳ ಆಶೀರ್ವಾದ ಹಾಗೂ ಅಧ್ಯಕ್ಷ ಶಿವಕುಮಾರ ಎಚ್. ಪಾಟೀಲ ಅವರ ಮಾರ್ಗದರ್ಶನದಲ್ಲಿ ಡಿಡಿಪಿಐ ಆರ್.ಎಸ್. ಬುರಡಿ, ಬಿಇಒ, ಮುಖ್ಯೋಪಾಧ್ಯಾಯರು ಹಾಗೂ ಪ್ರತಿಷ್ಠಾನದ ಪದಾಧಿಕಾರಿಗಳ ಸಹಕಾರದೊಂದಿಗೆ ಈ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.

ಗದಗ ನಗರ ಹಾಗೂ ತಾಲೂಕಿನ 30 ಸರ್ಕಾರಿ ಪ್ರೌಢಶಾಲೆಗಳಿಗೆ ಭೇಟಿ ನೀಡಿದ ಪ್ರತಿಷ್ಠಾನದ ಪದಾಧಿಕಾರಿಗಳು, ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಮೊದಲ ಐದು ಸ್ಥಾನ ಪಡೆದ ಸುಮಾರು 150 ವಿದ್ಯಾರ್ಥಿಗಳಿಗೆ ನಗದು ಬಹುಮಾನ, ಪ್ರಶಂಸಾ ಪತ್ರ ಹಾಗೂ ಕಾಲೇಜು ಬ್ಯಾಗ್ ವಿತರಿಸಿ ಅಭಿನಂದಿಸಿದರು.

ಸಿದ್ಧಲಿಂಗನಗರ, ಆಶ್ರಯ ಕಾಲೋನಿ, ರಾಜೀವಗಾಂಧಿ ನಗರ, ಬೆಟಗೇರಿ ಗಾಂಧಿನಗರ ಹಾಗೂ ಗದುಗಿನ ಉರ್ದು ಸರ್ಕಾರಿ ಪ್ರೌಢಶಾಲೆಗಳಲ್ಲಿ ನಡೆದ ಪ್ರತ್ಯೇಕ ಕಾರ್ಯಕ್ರಮಗಳಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಶಾಲೆಗಳ ಮುಖ್ಯೋಪಾಧ್ಯಾಯರು, ಶಿಕ್ಷಕರು ಹಾಗೂ ಪ್ರತಿಷ್ಠಾನದ ಪದಾಧಿಕಾರಿಗಳು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

“ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳ ಸಾಧನೆಯನ್ನು ಗುರುತಿಸಿ ಗೌರವಿಸುವುದು ಅವರಲ್ಲಿ ಆತ್ಮವಿಶ್ವಾಸ ಹೆಚ್ಚಿಸುವುದರ ಜೊತೆಗೆ ಇತರ ವಿದ್ಯಾರ್ಥಿಗಳಿಗೂ ಸ್ಫೂರ್ತಿಯಾಗುತ್ತದೆ. ಶಿಕ್ಷಣ ಸೇವೆಯ ಮೂಲಕ ಸಮಾಜ ನಿರ್ಮಾಣಕ್ಕೆ ಪ್ರತಿಷ್ಠಾನ ಸದಾ ಬದ್ಧವಾಗಿದೆ.”

– ಸುಭಾಶ್ಚಂದ್ರ ಬೆಟದೂರ, ಕಾರ್ಯದರ್ಶಿ, ಬಿ.ಜಿ. ಅಣ್ಣಿಗೇರಿ ಪ್ರತಿಷ್ಠಾನ

2028ರ ಚುನಾವಣೆಗೆ ಎಸ್‌ಡಿಪಿಐ ಸಜ್ಜು

0

ವಿಜಯಸಾಕ್ಷಿ ಸುದ್ದಿ, ಗದಗ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ವತಿಯಿಂದ ಗದಗ ನಗರದಲ್ಲಿ ಆಯೋಜಿಸಿದ್ದ ‘ಲೀಡರ್ಸ್ ಕಾಂಕ್ಲೇವ್’ ಕಾರ್ಯಕ್ರಮದಲ್ಲಿ ಪಕ್ಷದ ರಾಷ್ಟ್ರೀಯ ಹಾಗೂ ರಾಜ್ಯ ನಾಯಕರು ಭಾಗವಹಿಸಿ, ಸಂಘಟನೆ ಬಲವರ್ಧನೆ, ಮುಂಬರುವ ಚುನಾವಣಾ ಸಿದ್ಧತೆ ಹಾಗೂ ಪಕ್ಷದ ಕಾರ್ಯತಂತ್ರಗಳ ಕುರಿತು ಚರ್ಚೆ ನಡೆಸಿದರು.

ಮುಳಗುಂದ ನಾಕಾ ವೃತ್ತದಲ್ಲಿ ಪಕ್ಷದ ರಾಷ್ಟ್ರೀಯ ಹಾಗೂ ರಾಜ್ಯ ನಾಯಕರಿಗೆ ಜಿಲ್ಲಾ ಘಟಕದ ವತಿಯಿಂದ ಭವ್ಯ ಸ್ವಾಗತ ಕೋರಲಾಯಿತು. ಬಳಿಕ ಮೆರವಣಿಗೆಯ ಮೂಲಕ ಕನಕ ಭವನ ಫಂಕ್ಷನ್ ಹಾಲ್‌ಗೆ ಆಗಮಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ನಂತರ ನಡೆದ ಸುದ್ದಿಗೋಷ್ಠಿಯಲ್ಲಿ ಎಸ್‌ಡಿಪಿಐ ರಾಷ್ಟ್ರೀಯ ಅಧ್ಯಕ್ಷ ಎಂ.ಕೆ. ಫೈಝಿ ಮಾತನಾಡಿ, ದೇಶದಲ್ಲಿ ಪ್ರಜಾಪ್ರಭುತ್ವ, ಸಂವಿಧಾನ, ಸಾಮಾಜಿಕ ನ್ಯಾಯ ಹಾಗೂ ಸಹೋದರತ್ವದ ಮೌಲ್ಯಗಳನ್ನು ಬಲಪಡಿಸುವ ಸಮರ್ಥ ನಾಯಕತ್ವವನ್ನು ಬೆಳೆಸುವುದು ಪಕ್ಷದ ಪ್ರಮುಖ ಉದ್ದೇಶವಾಗಿದೆ ಎಂದು ಹೇಳಿದರು.

ಪಕ್ಷವು ದೇಶದ 15 ರಾಜ್ಯಗಳಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದು, ದಲಿತರು, ಹಿಂದುಳಿದ ವರ್ಗಗಳು ಹಾಗೂ ಅಲ್ಪಸಂಖ್ಯಾತರ ಹಕ್ಕುಗಳ ರಕ್ಷಣೆಗಾಗಿ ನಿರಂತರವಾಗಿ ಧ್ವನಿ ಎತ್ತುತ್ತಿದೆ ಎಂದು ತಿಳಿಸಿದರು.

ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮಾತನಾಡಿ, ಉತ್ತರ ಕರ್ನಾಟಕ ಭಾಗದ ವಿವಿಧ ಜಿಲ್ಲೆಗಳ ಮುಖಂಡರು ಮತ್ತು ಪದಾಧಿಕಾರಿಗಳು ಸಮಾವೇಶದಲ್ಲಿ ಪಾಲ್ಗೊಂಡಿದ್ದು, ಸಂಘಟನೆ ಬಲವರ್ಧನೆ ಹಾಗೂ ಮುಂದಿನ ರಾಜಕೀಯ ಕಾರ್ಯತಂತ್ರಗಳ ಕುರಿತು ಚರ್ಚೆ ನಡೆಸಲಾಗಿದೆ ಎಂದರು.

ಮುಂಬರುವ ಜಿಲ್ಲಾ ಪಂಚಾಯಿತಿ, ಗ್ರಾಮ ಪಂಚಾಯಿತಿ, ನಗರಸಭೆ, ಪುರಸಭೆ ಹಾಗೂ 2028ರ ವಿಧಾನಸಭೆ ಚುನಾವಣೆಯಲ್ಲಿ ಪಕ್ಷ ಸಕ್ರಿಯವಾಗಿ ಸ್ಪರ್ಧಿಸಲಿದ್ದು, ರಾಜ್ಯದ 50 ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು. ಗದಗ ಜಿಲ್ಲೆಯಲ್ಲಿಯೂ ಅರ್ಹ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗುವುದು ಎಂದರು.

ಸುದ್ದಿಗೋಷ್ಠಿಯಲ್ಲಿ ಪತ್ರಕರ್ತರು ಕೇಳಿದ “ಎಸ್‌ಡಿಪಿಐ ಬಿಜೆಪಿಯ ಬಿ-ಟೀಮ್ ಎಂಬ ಆರೋಪ” ಕುರಿತ ಪ್ರಶ್ನೆಗೆ ಉತ್ತರಿಸಿದ ಅಬ್ದುಲ್ ಮಜೀದ್, ತಮ್ಮ ಪಕ್ಷ ಯಾರನ್ನಾದರೂ ಗೆಲ್ಲಿಸಲು ಅಥವಾ ಸೋಲಿಸಲು ಚುನಾವಣೆ ಎದುರಿಸುವುದಿಲ್ಲ. ಜನಪರ ಆಡಳಿತಕ್ಕಾಗಿ ಮಾತ್ರ ಚುನಾವಣೆಯಲ್ಲಿ ಸ್ಪರ್ಧಿಸುತ್ತದೆ ಎಂದು ಸ್ಪಷ್ಟಪಡಿಸಿದರು.

ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಉಪಾಧ್ಯಕ್ಷ ಮೊಹಮ್ಮದ್ ಶಾಫಿ, ರಾಷ್ಟ್ರೀಯ ಕಾರ್ಯದರ್ಶಿ ಮೊಯಿದ್ದೀನ್, ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ, ರಾಜ್ಯ ಕಾರ್ಯದರ್ಶಿ ಅಫ್ಸರ್ ಕೆ.ಆರ್. ನಗರ ಹಾಗೂ ಗದಗ ಜಿಲ್ಲಾ ಅಧ್ಯಕ್ಷ ಬಿಲಾಲ್ ಗೋಕಾವಿ ಸೇರಿದಂತೆ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

“ಪ್ರಜಾಪ್ರಭುತ್ವ, ಸಂವಿಧಾನ, ಸಾಮಾಜಿಕ ನ್ಯಾಯ ಮತ್ತು ಸಹೋದರತ್ವದ ಮೌಲ್ಯಗಳನ್ನು ಬಲಪಡಿಸುವ ಸಮರ್ಥ ನಾಯಕತ್ವವನ್ನು ಬೆಳೆಸುವುದೇ ಎಸ್‌ಡಿಪಿಐಯ ಪ್ರಮುಖ ಗುರಿಯಾಗಿದೆ.”

– ಎಂ.ಕೆ. ಫೈಝಿ, ರಾಷ್ಟ್ರೀಯ ಅಧ್ಯಕ್ಷ, ಎಸ್‌ಡಿಪಿಐ

ಕನ್ನಡ ಶಾಲೆ ಉಳಿದರೆ ಮಾತ್ರ ಕನ್ನಡ ಭಾಷೆ ಉಳಿಯುತ್ತದೆ: ಸಭಾಪತಿ ಬಸವರಾಜ ಹೊರಟ್ಟಿ

0

ವಿಜಯಸಾಕ್ಷಿ ಸುದ್ದಿ, ಗದಗ: ನಾಡಿನ ಲಕ್ಷಾಂತರ ಬಡ ಮತ್ತು ಮಧ್ಯಮ ವರ್ಗದ ಮಕ್ಕಳಿಗೆ ಶಿಕ್ಷಣದ ಬೆಳಕು ನೀಡಿದ ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳ ಅಸ್ತಿತ್ವ ಇಂದು ಅಪಾಯದಲ್ಲಿದ್ದು, ಕನ್ನಡ ಶಾಲೆಗಳನ್ನು ಉಳಿಸಿ ಬೆಳೆಸಿದರೆ ಮಾತ್ರ ಕನ್ನಡ ಭಾಷೆಯನ್ನು ಉಳಿಸಲು ಸಾಧ್ಯ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.

ನಗರದ ಸಿದ್ದಲಿಂಗ ನಗರದ ಸರ್ಕಾರಿ ಪ್ರೌಢಶಾಲೆಯಲ್ಲಿ ಅವ್ವ ಸೇವಾ ಟ್ರಸ್ಟ್ ವತಿಯಿಂದ ಸಾರ್ಥಕ ಸೇವೆ ಸಲ್ಲಿಸಿದ ಶಿಕ್ಷಕರು ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.

ಶಿಕ್ಷಣವು ಮಕ್ಕಳ ಭವಿಷ್ಯ ರೂಪಿಸುವ ಅತ್ಯಂತ ಪ್ರಮುಖ ಸಾಧನವಾಗಿದೆ. ಬಡ ಹಾಗೂ ಮಧ್ಯಮ ವರ್ಗದ ಮಕ್ಕಳಿಗೆ ಶಿಕ್ಷಣ ನೀಡುತ್ತಿರುವ ಸರ್ಕಾರಿ ಕನ್ನಡ ಶಾಲೆಗಳು ಒಂದೊಂದಾಗಿ ಮುಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಒಂದು ಕಡೆ ಸರ್ಕಾರ ಕನ್ನಡ ಭಾಷೆ ಉಳಿಸುವ ಬಗ್ಗೆ ಮಾತನಾಡುತ್ತಿದ್ದರೆ, ಮತ್ತೊಂದು ಕಡೆ ಕನ್ನಡದ ಬೇರುಗಳಾದ ಶಾಲೆಗಳೇ ಮುಚ್ಚುತ್ತಿರುವುದು ಕಳವಳಕಾರಿ ಸಂಗತಿ ಎಂದು ಹೇಳಿದರು.

ಆಂಗ್ಲ ಮಾಧ್ಯಮದ ವ್ಯಾಮೋಹದಿಂದ ಪಾಲಕರು ಕನ್ನಡ ಶಾಲೆಗಳಿಂದ ದೂರವಾಗುತ್ತಿದ್ದಾರೆ. ಈ ಪರಿಸ್ಥಿತಿ ಬದಲಾಗಬೇಕಾದರೆ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ, ಅಗತ್ಯ ಮೂಲಸೌಕರ್ಯ ಹಾಗೂ ಆಧುನಿಕ ಕಲಿಕಾ ವ್ಯವಸ್ಥೆ ಕಲ್ಪಿಸಬೇಕು. ಪ್ರಾಥಮಿಕ ಹಂತದಿಂದಲೇ ಸ್ಪರ್ಧಾತ್ಮಕ ಶಿಕ್ಷಣಕ್ಕೆ ಒತ್ತು ನೀಡುವ ಮೂಲಕ ಪಾಲಕರಲ್ಲಿ ವಿಶ್ವಾಸ ಮೂಡಿಸಬೇಕು ಎಂದು ಸಲಹೆ ನೀಡಿದರು.

ಶಿಕ್ಷಕರಿಗೆ ಬೋಧನೆ ಹೊರತುಪಡಿಸಿ ಅನಗತ್ಯ ಆಡಳಿತಾತ್ಮಕ ಹಾಗೂ ಇತರ ಜವಾಬ್ದಾರಿಗಳನ್ನು ನೀಡಬಾರದು. ಶಿಕ್ಷಕರು ಒತ್ತಡಮುಕ್ತವಾಗಿ ಪಾಠ ಮಾಡುವ ವಾತಾವರಣ ನಿರ್ಮಿಸಿದರೆ ಮಾತ್ರ ಶಿಕ್ಷಣದ ಗುಣಮಟ್ಟ ಹೆಚ್ಚಲು ಸಾಧ್ಯ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಪ್ರೊ. ಎಸ್.ವಿ. ಸಂಕನೂರ, ಡಾ. ಬಸವರಾಜ ಧಾರವಾಡ, ಎಸ್.ಎಸ್. ಪಟ್ಟಣಶೆಟ್ಟಿ, ಐ.ಬಿ. ಬೆನಕಪ್ಪ, ವಿ.ವಿ. ನಡುವಿನಮನಿ, ಶಂಕರ್ ಹಡಗಲಿ, ವಿದ್ಯಾವತಿ ಗಡಗಿ, ಜಯಲಕ್ಷ್ಮಿ ಅಣ್ಣಿಗೇರಿ, ಎಸ್.ಎಂ. ಅಗಡಿ, ಸುನೀಲ ವರ್ಣೇಕರ, ಮಾಂತೇಶ ಚಿತ್ತರಗಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

“ಕನ್ನಡ ಶಾಲೆಗಳನ್ನು ಉಳಿಸಿ ಬೆಳೆಸಿದರೆ ಮಾತ್ರ ಕನ್ನಡ ಭಾಷೆ ಉಳಿಯುತ್ತದೆ. ಶಾಲೆಗಳ ಅಳಿವು ತಡೆಯಲು ಸರ್ಕಾರ ಇಂದಿನಿಂದಲೇ ವಿಶೇಷ ಯೋಜನೆಗಳನ್ನು ರೂಪಿಸಬೇಕು.”

– ಬಸವರಾಜ ಹೊರಟ್ಟಿ, ವಿಧಾನ ಪರಿಷತ್ ಸಭಾಪತಿ

21 ವರ್ಷದ ಯುವತಿ ನಾಪತ್ತೆ: ಪತ್ತೆಗೆ ಸಾರ್ವಜನಿಕರ ಸಹಕಾರ ಕೋರಿದ ಪೊಲೀಸರು

0

ವಿಜಯಸಾಕ್ಷಿ ಸುದ್ದಿ, ಬೆಟಗೇರಿ: ಬಹಿರ್ದೆಸೆಗೆಂದು ಮನೆಯಿಂದ ತೆರಳಿದ್ದ 21 ವರ್ಷದ ಯುವತಿಯೊಬ್ಬಳು ನಾಪತ್ತೆಯಾಗಿರುವ ಘಟನೆ ಬೆಟಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಬೆಟಗೇರಿ ಹರಿಜನಕೇರಿಯ ನಿವಾಸಿ ಕಾವ್ಯಾ ತಂದೆ ಪಂಚಾಕ್ಷರಿ ದೊಡ್ಡಮನಿ (21) ಜುಲೈ 11ರಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ಬಹಿರ್ದೆಸೆಗೆಂದು ಮನೆಯಿಂದ ತೆರಳಿದ್ದು, ಬಳಿಕ ಮನೆಗೆ ವಾಪಸ್ ಆಗಿಲ್ಲ. ಸಂಬಂಧಿಕರು ಎಲ್ಲೆಡೆ ಹುಡುಕಾಟ ನಡೆಸಿದರೂ ಯಾವುದೇ ಸುಳಿವು ಸಿಗದ ಹಿನ್ನೆಲೆಯಲ್ಲಿ ತಾಯಿ ಸುಶೀಲಾ ಪಂಚಾಕ್ಷರಿ ದೊಡ್ಡಮನಿ ನೀಡಿದ ದೂರಿನ ಮೇರೆಗೆ ಬೆಟಗೇರಿ ಪೊಲೀಸ್ ಠಾಣೆಯಲ್ಲಿ ಗುನ್ನಾ ಸಂಖ್ಯೆ 67/2026ರ ಅಡಿಯಲ್ಲಿ ಮಹಿಳೆ ಕಾಣೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಕಾವ್ಯಾ ಸುಮಾರು 5 ಅಡಿ 4 ಇಂಚು ಎತ್ತರ ಹೊಂದಿದ್ದು, ಸಾಧಾರಣ ಮೈಕಟ್ಟು, ಕೆಂಪು ಮೈಬಣ್ಣ, ಕೋಲುಮುಖ, ನೆಟ್ಟನೆಯ ಮೂಗು, ಕಪ್ಪು ಕಣ್ಣು ಹಾಗೂ ಉದ್ದನೆಯ ಕಪ್ಪು ಕೂದಲು ಹೊಂದಿದ್ದಾಳೆ. ಎಡ ಮುಂಗೈ ಮೇಲೆ ಹಳೆಯ ಗಾಯದ ಕಲೆ ಮತ್ತು ಎಡಗಾಲಿನ ಪಾದದ ಮೇಲೆ ಸುಟ್ಟ ಗಾಯದ ಕಲೆ ಗುರುತಾಗಿ ಇದೆ. ಮನೆಯಿಂದ ಹೊರಡುವಾಗ ಕೆಂಪು ಬಣ್ಣದ ಲಾಂಗ್ ಚೂಡಿದಾರ ಧರಿಸಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.

ಯುವತಿಯ ಬಗ್ಗೆ ಯಾವುದೇ ಮಾಹಿತಿ ದೊರೆತಲ್ಲಿ ಸಮೀಪದ ಪೊಲೀಸ್ ಠಾಣೆ ಅಥವಾ ಬೆಟಗೇರಿ ಪೊಲೀಸ್ ಠಾಣೆ (ದೂ. 08372-246333), ಪಿಎಸ್‌ಐ ಮೊ. 9480804449 ಅಥವಾ ಗದಗ ಜಿಲ್ಲಾ ಪೊಲೀಸ್ ಕಂಟ್ರೋಲ್ ರೂಂ (08372-238300 / 9480804400)ಗೆ ಮಾಹಿತಿ ನೀಡುವಂತೆ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಮೈಲಾರಪ್ಪ ಮೆಣಸಗಿ ಕಾಲೇಜಿನಲ್ಲಿ ಕಾಲೇಜು ಸಂಸತ್ ಚುನಾವಣೆ

0

ವಿಜಯಸಾಕ್ಷಿ ಸುದ್ದಿ, ಗದಗ: ವಿದ್ಯಾರ್ಥಿಗಳಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳು, ಚುನಾವಣಾ ಪ್ರಕ್ರಿಯೆಯ ಅರಿವು ಹಾಗೂ ನಾಯಕತ್ವದ ಗುಣಗಳನ್ನು ಬೆಳೆಸುವ ಉದ್ದೇಶದಿಂದ ನಗರದ ಮೈಲಾರಪ್ಪ ಮೆಣಸಗಿ ಪದವಿ ಪೂರ್ವ ಕಾಲೇಜಿನಲ್ಲಿ ಬುಧವಾರ ಕಾಲೇಜು ಸಂಸತ್ (ಕ್ಯಾಬಿನೆಟ್) ಚುನಾವಣೆ ಯಶಸ್ವಿಯಾಗಿ ನಡೆಯಿತು.

ಚುನಾವಣೆಗಾಗಿ ಪ್ರತ್ಯೇಕ ಮತಗಟ್ಟೆ, ಮತಪೆಟ್ಟಿಗೆ ಹಾಗೂ ಮತದಾನದ ವ್ಯವಸ್ಥೆ ಕಲ್ಪಿಸಲಾಗಿತ್ತು. ವಿದ್ಯಾರ್ಥಿಗಳು ಸರದಿಯಲ್ಲಿ ನಿಂತು ರಹಸ್ಯ ಮತದಾನದ ಮೂಲಕ ತಮ್ಮ ನೆಚ್ಚಿನ ಅಭ್ಯರ್ಥಿಗಳಿಗೆ ಮತ ಚಲಾಯಿಸಿದರು. ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಚುನಾವಣಾಧಿಕಾರಿಗಳಾಗಿ ಕಾರ್ಯನಿರ್ವಹಿಸಿ, ಸಂಪೂರ್ಣ ಚುನಾವಣಾ ಪ್ರಕ್ರಿಯೆಯನ್ನು ನಿಷ್ಪಕ್ಷಪಾತವಾಗಿ ನಡೆಸಿಕೊಟ್ಟರು.

ಪ್ರಧಾನ ಕಾರ್ಯದರ್ಶಿ ಹುದ್ದೆಗೆ ನಡೆದ ಚುನಾವಣೆಯಲ್ಲಿ ನಿತಿನ್ ಪಪ್ಪಣ್ಣವರ ಭರ್ಜರಿ ಬಹುಮತದೊಂದಿಗೆ ಆಯ್ಕೆಯಾದರು. ಕ್ರೀಡಾ ಸಚಿವರಾಗಿ ಸೃಜನ್ ಬಳಿಗಾರ ಮತ್ತು ಪಲ್ಲವಿ ಸುನಗಾರ, ಸಾಂಸ್ಕೃತಿಕ ಸಚಿವರಾಗಿ ಹರ್ಷಿತ್ ಎಂ.ಆರ್. ಹಾಗೂ ದಿಶಾ ಹಬೀಬ ಆಯ್ಕೆಯಾದರು.

ಈ ಸಂದರ್ಭದಲ್ಲಿ ಇನ್‌ಸೈಟ್ ಅಕಾಡೆಮಿಯ ಅಧ್ಯಕ್ಷ ಎಸ್.ಜಿ. ಪಾಟೀಲ್ ಮಾತನಾಡಿ, ವಿದ್ಯಾರ್ಥಿಗಳು ನಾಯಕತ್ವದ ಗುಣಗಳನ್ನು ಬೆಳೆಸಿಕೊಂಡು ಜವಾಬ್ದಾರಿಯುತ ನಾಗರಿಕರಾಗಿ ರೂಪುಗೊಳ್ಳಬೇಕು ಎಂದು ಕರೆ ನೀಡಿದರು.

ಗದುಗಿನ ಸುವರ್ಣಾ ಮದರಿಮಠಗೆ ‘ನಾರೀ ಸಮ್ಮಾನ್-2026’ ಗೌರವ

0

ವಿಜಯಸಾಕ್ಷಿ ಸುದ್ದಿ, ಗದಗ: ಉದ್ಯಮ ಹಾಗೂ ಸಮಾಜಸೇವಾ ಕ್ಷೇತ್ರದಲ್ಲಿ ಸಲ್ಲಿಸಿರುವ ಗಮನಾರ್ಹ ಸೇವೆಯನ್ನು ಗುರುತಿಸಿ ಗದುಗಿನ ಮಹಿಳಾ ಸಾಧಕಿ ಶ್ರೀಮತಿ ಸುವರ್ಣಾ ಎಸ್. ಮದರಿಮಠ ಅವರಿಗೆ ಪ್ರತಿಷ್ಠಿತ ‘ನಾರೀ ಸಮ್ಮಾನ್-2026’ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.

ಮೀಡಿಯಾ ವಿಷನ್ ಬೆಂಗಳೂರು ಸಂಸ್ಥೆ, ಝೀ ಕನ್ನಡ ನ್ಯೂಸ್ ಮಾಧ್ಯಮ ಸಹಭಾಗಿತ್ವದಲ್ಲಿ ಬೆಂಗಳೂರಿನ ರೆಸಿಡೆನ್ಸಿ ರಸ್ತೆಯ ದಿ ಚಾನ್ಸೆರಿ ಪೆವಿಲಿಯನ್ ಸಭಾಂಗಣದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ 14 ಮಹಿಳಾ ಸಾಧಕಿಯರೊಂದಿಗೆ ಸುವರ್ಣಾ ಮದರಿಮಠ ಅವರಿಗೂ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಲೋಕಸಭಾ ಸದಸ್ಯೆ ಪ್ರಭಾ ಮಲ್ಲಿಕಾರ್ಜುನ, ಕೆಪಿಸಿಸಿ ಮಹಿಳಾ ವಿಭಾಗದ ಅಧ್ಯಕ್ಷೆ ಸೌಮ್ಯಾ ರೆಡ್ಡಿ, ಶಾಸಕ ಟಿ.ಎ. ಶರವಣ ಹಾಗೂ ಚಲನಚಿತ್ರ ನಟ ಅನಿರುದ್ಧ ಜತಕರ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಿದ ಗಣ್ಯರು, ವಿವಿಧ ಕ್ಷೇತ್ರಗಳಲ್ಲಿ ಮಹಿಳೆಯರು ಸಾಧಿಸುತ್ತಿರುವ ಯಶಸ್ಸು ಸಮಾಜಕ್ಕೆ ಪ್ರೇರಣೆಯಾಗಿದ್ದು, ಇಂತಹ ಸಾಧಕರನ್ನು ಗುರುತಿಸಿ ಗೌರವಿಸುವುದು ಹೆಮ್ಮೆಯ ಸಂಗತಿ ಎಂದು ಅಭಿಪ್ರಾಯಪಟ್ಟರು.

ಸಮಾಜಮುಖಿ ಕಾರ್ಯ, ನಾಯಕತ್ವ ಹಾಗೂ ಸಮಾಜದ ಅಭಿವೃದ್ಧಿಗೆ ನೀಡಿರುವ ಕೊಡುಗೆಯನ್ನು ಪರಿಗಣಿಸಿ ಸುವರ್ಣಾ ಮದರಿಮಠ ಅವರನ್ನು ಈ ಪ್ರತಿಷ್ಠಿತ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಆಯೋಜಕರು ತಿಳಿಸಿದರು.

ಪ್ರಶಸ್ತಿ ಪಡೆದ ಸುವರ್ಣಾ ಮದರಿಮಠ ಅವರನ್ನು ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಗಣ್ಯರು ಹಾಗೂ ಅಭಿಮಾನಿಗಳು ಅಭಿನಂದಿಸಿದ್ದಾರೆ.

ಹತ್ತಿ ಇಳುವರಿ ಹೆಚ್ಚಿಸಲು ವೈಜ್ಞಾನಿಕ ಕೃಷಿಯೇ ಮಂತ್ರ

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ತಾಲೂಕಿನ ಮಾಗಡಿ ಗ್ರಾಮದಲ್ಲಿ ಧಾರವಾಡ ಹತ್ತಿ ಸಂಶೋಧನಾ ಕೇಂದ್ರ ಹಾಗೂ ಕೃಷಿ ಇಲಾಖೆ ಸಹಯೋಗದಲ್ಲಿ ಮಂಗಳವಾರ ಹತ್ತಿ ಬೆಳೆ ಉತ್ಪಾದಕತೆ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ರೈತರಿಗೆ ಹತ್ತಿ ಬೆಳೆಯ ವೈಜ್ಞಾನಿಕ ನಿರ್ವಹಣೆ, ಆಧುನಿಕ ಕೃಷಿ ತಂತ್ರಜ್ಞಾನ ಹಾಗೂ ಉತ್ಪಾದಕತೆ ಹೆಚ್ಚಿಸುವ ವಿಧಾನಗಳ ಕುರಿತು ಸಮಗ್ರ ಮಾಹಿತಿ ನೀಡಲಾಯಿತು.

ಜಂಟಿ ಕೃಷಿ ನಿರ್ದೇಶಕಿ ಚೇತನಾ ಪಾಟೀಲ ಮಾತನಾಡಿ, ಉತ್ತಮ ಗುಣಮಟ್ಟದ ಬೀಜಗಳ ಆಯ್ಕೆ, ಸಮಯೋಚಿತ ಬಿತ್ತನೆ, ಮಣ್ಣು ಪರೀಕ್ಷೆ ಆಧಾರಿತ ಗೊಬ್ಬರ ಬಳಕೆ, ಸಮರ್ಪಕ ನೀರಿನ ನಿರ್ವಹಣೆ ಹಾಗೂ ವೈಜ್ಞಾನಿಕ ಕೃಷಿ ಪದ್ಧತಿಗಳನ್ನು ಅನುಸರಿಸಿದರೆ ಹತ್ತಿ ಉತ್ಪಾದನೆ ಮತ್ತು ಉತ್ಪಾದಕತೆ ಹೆಚ್ಚಿಸಬಹುದು ಎಂದು ತಿಳಿಸಿದರು. ಹತ್ತಿ ಬೆಳೆಗೆ ಕಂಟಕವಾಗಿರುವ ಗುಲಾಬಿ ಕಾಯಿಕೊರಕ ಬಾಧೆ ನಿಯಂತ್ರಣ ಕ್ರಮಗಳ ಬಗ್ಗೆಯೂ ವಿವರಿಸಿದರು.

ಧಾರವಾಡ ಹತ್ತಿ ಸಂಶೋಧನಾ ಕೇಂದ್ರದ ಸಸ್ಯ ಕೀಟಶಾಸ್ತ್ರ ವಿಜ್ಞಾನಿಗಳಾದ ಡಾ. ವಿ.ಕೆ. ಶಾನವಾಡ, ಡಾ. ಸುನೀಲ ಕರೀಕಟ್ಟಿ ಹಾಗೂ ಪೂರ್ಣಿಮಾ ಮಟ್ಟಿ ಮಾತನಾಡಿ, ಆರಂಭಿಕ ಹಂತದಿಂದಲೇ ಕೀಟ ಮತ್ತು ರೋಗಗಳ ಮೇಲ್ವಿಚಾರಣೆ ನಡೆಸಬೇಕು. ಗುಲಾಬಿ ಕಾಯಿಕೊರಕ, ಹಸಿರು ಎಲೆಹುಳು, ಬಿಳಿನೊಣ ಸೇರಿದಂತೆ ಪ್ರಮುಖ ಕೀಟಗಳ ನಿಯಂತ್ರಣಕ್ಕೆ ಮೋಹಕ ಬಲೆ ಹಾಗೂ ಸಮಗ್ರ ಕೀಟ ನಿರ್ವಹಣಾ ಕ್ರಮಗಳನ್ನು ಅನುಸರಿಸುವಂತೆ ಸಲಹೆ ನೀಡಿದರು.

ಕೃಷಿ ಉಪನಿರ್ದೇಶಕಿ ಸ್ಪೂರ್ತಿ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಭಾಗಿತ್ವದಲ್ಲಿ ಜಾರಿಯಲ್ಲಿರುವ ಈ ಅಭಿಯಾನದ ಉದ್ದೇಶ ಪ್ರತಿ ಎಕರೆಗೆ ಹತ್ತಿ ಉತ್ಪಾದನೆ ಹೆಚ್ಚಿಸುವುದು, ರೈತರಿಗೆ ಆಧುನಿಕ ಕೃಷಿ ತಂತ್ರಜ್ಞಾನ ಪರಿಚಯಿಸುವುದು ಹಾಗೂ ಉತ್ಪಾದನಾ ವೆಚ್ಚ ಕಡಿಮೆ ಮಾಡಿ ಆದಾಯ ಹೆಚ್ಚಿಸುವುದಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಹತ್ತಿ ಬೆಳೆಗಾರ ಚನ್ನಪ್ಪ ಷಣ್ಮುಕಿ ಸೇರಿದಂತೆ ರೈತರು ತಜ್ಞರೊಂದಿಗೆ ಸಂವಾದ ನಡೆಸಿ ತಮ್ಮ ಸಂದೇಹಗಳಿಗೆ ಪರಿಹಾರ ಪಡೆದರು.

ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ವೀರಯ್ಯ ಮಠಪತಿ ಅಧ್ಯಕ್ಷತೆ ವಹಿಸಿದ್ದರು. ಕೃಷಿ ಇಲಾಖೆ ಅಧಿಕಾರಿಗಳಾದ ಶಿವಕುಮಾರ ಕಾಶಪ್ಪನವರ, ರೈತ ಮುಖಂಡರಾದ ಚಂದ್ರಶೇಖರ ಬಿ.ಟಿ., ಬಸವರಾಜ ಪಾಳೇದ, ಉಡಚಪ್ಪ ಕೆ., ನಾಗರಾಜ ಕುಲಕರ್ಣಿ, ಕಸ್ತೂರೆಮ್ಮ ಎಸ್., ಸಾವಿತ್ರಿ ಪಾಳೇದ, ಗೀತಾ ಹೂಗಾರ, ಶ್ರುವಿಕಾ ಭಾನು, ಆತ್ಮ ಯೋಜನೆ ಸಿಬ್ಬಂದಿ, ಪ್ರಗತಿಪರ ರೈತರು ಹಾಗೂ ಮಾಗಡಿ ಗ್ರಾಮದ ಹತ್ತಿ ಬೆಳೆಗಾರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

“ವೈಜ್ಞಾನಿಕ ಕೃಷಿ ಪದ್ಧತಿ ಹಾಗೂ ಸಮಗ್ರ ಕೀಟ ನಿರ್ವಹಣೆಯನ್ನು ಅಳವಡಿಸಿಕೊಂಡರೆ ಹತ್ತಿ ಬೆಳೆಯಲ್ಲಿ ಉತ್ತಮ ಇಳುವರಿ ಪಡೆಯಲು ಸಾಧ್ಯ.”

– ಚೇತನಾ ಪಾಟೀಲ, ಜಂಟಿ ಕೃಷಿ ನಿರ್ದೇಶಕಿ

ಸರ್ಕಾರಿ ಪದವಿ ಕಾಲೇಜಿಗೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪಟ್ಟಣದಲ್ಲಿ ಸರ್ಕಾರಿ ಪದವಿ ಮಹಾವಿದ್ಯಾಲಯ ಸ್ಥಾಪಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ನೇತೃತ್ವದಲ್ಲಿ ನೂರಾರು ವಿದ್ಯಾರ್ಥಿಗಳು ಹಾಗೂ ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಧನಂಜಯ ಎಂ. ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಪಟ್ಟಣದ ಹೊಸ ಬಸ್ ನಿಲ್ದಾಣದ ಎದುರು ರಾಜ್ಯ ಹೆದ್ದಾರಿಯನ್ನು ತಡೆದ ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಕೆಲಕಾಲ ರಸ್ತೆ ತಡೆ ನಡೆಸಿದರು. ಬಳಿಕ ಸರ್ಕಾರಿ ಪದವಿ ಕಾಲೇಜು ಆರಂಭಿಸುವಂತೆ ಒತ್ತಾಯಿಸಿದರು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಎಬಿವಿಪಿ ಗದಗ ಜಿಲ್ಲಾ ಸಂಚಾಲಕ ಅಭಿಷೇಕ ಉಮಚಗಿ, ಲಕ್ಷ್ಮೇಶ್ವರ ತಾಲೂಕು ಕೇಂದ್ರವಾಗಿ ಎಂಟು-ಒಂಬತ್ತು ವರ್ಷಗಳಾದರೂ ಸರ್ಕಾರಿ ಪದವಿ ಕಾಲೇಜು ಆರಂಭವಾಗದಿರುವುದು ವಿಪರ್ಯಾಸ. ಸಾವಿರಾರು ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳು ಪದವಿ ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಖಾಸಗಿ ಕಾಲೇಜುಗಳ ಶುಲ್ಕ ಭರಿಸಲು ಸಾಧ್ಯವಾಗದ ಅನೇಕ ವಿದ್ಯಾರ್ಥಿಗಳು ಪಿಯುಸಿ ಬಳಿಕ ಶಿಕ್ಷಣ ಮೊಟಕುಗೊಳಿಸುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಎಬಿವಿಪಿ ಕಾರ್ಯಕರ್ತೆ ಅನು ಅಣ್ಣಿಗೇರಿ ಮಾತನಾಡಿ, ಹಲವು ವರ್ಷಗಳಿಂದ ಸರ್ಕಾರಿ ಪದವಿ ಕಾಲೇಜಿನ ಬೇಡಿಕೆ ಇದ್ದರೂ ಸರ್ಕಾರ ಸ್ಪಂದಿಸಿಲ್ಲ. ವಿದ್ಯಾರ್ಥಿಗಳು ಪದವಿ ಶಿಕ್ಷಣಕ್ಕಾಗಿ ದೂರದ ಊರುಗಳಿಗೆ ತೆರಳಬೇಕಾದ ಅನಿವಾರ್ಯತೆ ಎದುರಾಗಿದೆ. ವಿಶೇಷವಾಗಿ ವಿದ್ಯಾರ್ಥಿನಿಯರು ಹೆಚ್ಚಿನ ತೊಂದರೆ ಅನುಭವಿಸುತ್ತಿದ್ದು, ಅವರ ಹಿತದೃಷ್ಟಿಯಿಂದ ಕೂಡಲೇ ಸರ್ಕಾರಿ ಪದವಿ ಕಾಲೇಜು ಆರಂಭಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ವಿನಾಯಕ ಕುಂಬಾರ, ಸಾಗರ ಮೆಹರವಾಡೆ, ಪ್ರೀತಂ ರಾಜೋಳಿ, ವಿನಯ ಸಪದಳ, ರತ್ನಾ ಕಮತದ, ಸವಿತಾ ಕರೆಯತ್ತಿನ, ಚೈತ್ರಾ ಕೊರಕೇರಿ, ತೇಜಶ್ವಿನಿ ಅರಳಿ, ಭಾಗ್ಯ ವಡವಿ, ಅಪೇಕ್ಷಾ ಶೇರಸೂರಿ, ಅಪೂರ್ವ ಹವಳದ, ಜ್ಯೋತಿ ಬಾಡಗಿ, ರಮ್ಯಾ ಮಹೇಂದ್ರಕರ, ರಾಜೇಶ್ವರಿ ಪಟ್ಟೇದ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

“2026-27ನೇ ಶೈಕ್ಷಣಿಕ ವರ್ಷದಲ್ಲೇ ಸರ್ಕಾರಿ ಪದವಿ ಕಾಲೇಜು ಆರಂಭಿಸಬೇಕು. ಇಲ್ಲವಾದರೆ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರೊಂದಿಗೆ ಲಕ್ಷ್ಮೇಶ್ವರ ಬಂದ್ ನಡೆಸಿ ಉಗ್ರ ಹೋರಾಟ ಕೈಗೊಳ್ಳಲಾಗುವುದು.”

– ಅಭಿಷೇಕ ಉಮಚಗಿ, ಎಬಿವಿಪಿ ಜಿಲ್ಲಾ ಸಂಚಾಲಕ

ಲಕ್ಷ್ಮೇಶ್ವರ ಪೊಲೀಸರಿಗೆ ಮತ್ತೊಂದು ಯಶಸ್ಸು: ₹4.18 ಲಕ್ಷ ಮೌಲ್ಯದ ಆಸ್ತಿ ವಶಕ್ಕೆ

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪಟ್ಟಣದಲ್ಲಿ ನಡೆದ ಮನೆ ಕಳ್ಳತನ, ಅಂಗಡಿ ಕಳ್ಳತನ ಹಾಗೂ ನಕಲಿ ಬಂಗಾರ ನೀಡಿ ಹಣ ವಂಚಿಸಿದ ನಾಲ್ಕು ಪ್ರತ್ಯೇಕ ಪ್ರಕರಣಗಳನ್ನು ಭೇದಿಸುವಲ್ಲಿ ಲಕ್ಷ್ಮೇಶ್ವರ ಪೊಲೀಸರು ಯಶಸ್ವಿಯಾಗಿದ್ದು, ಮೂವರು ಆರೋಪಿಗಳನ್ನು ಬಂಧಿಸಿ ₹4.18 ಲಕ್ಷ ಮೌಲ್ಯದ ನಗದು ಹಾಗೂ ಬೆಳ್ಳಿ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ.

ಫೆಬ್ರವರಿ 2 ಮತ್ತು 3ರಂದು ಭಾನು ಮಾರ್ಕೆಟ್‌ನಲ್ಲಿರುವ ಸಂತೋಷ ಕಾಶೆಟ್ಟಿ ಹಾಗೂ ಮಹೇಶ ಹೊಗೆಸೊಪ್ಪಿನ ಅವರ ಕಿರಾಣಿ ಮತ್ತು ಸ್ಟೇಷನರಿ ಅಂಗಡಿಗಳಲ್ಲಿ ನಡೆದ ಕಳ್ಳತನ, ಜೂನ್ 8ರಂದು ಸೊಪ್ಪಿನಕೇರಿಯ ನಾಗರತ್ನ ಹೂಗಾರ ಅವರ ಮನೆಯಲ್ಲಿ ನಡೆದ ಕಳ್ಳತನ ಹಾಗೂ ಅದೇ ದಿನ ಕೆಎಸ್‌ಆರ್‌ಟಿಸಿ ಡಿಪೋ ಸಮೀಪದ ಚಹಾ ಅಂಗಡಿಯಲ್ಲಿ ನಕಲಿ ಬಂಗಾರ ನೀಡಿ ಹಣ ಪಡೆದು ವಂಚಿಸಿದ ಪ್ರಕರಣ ಸೇರಿ ಒಟ್ಟು ನಾಲ್ಕು ಪ್ರಕರಣಗಳನ್ನು ಪೊಲೀಸರು ಭೇದಿಸಿದ್ದಾರೆ.

ಜಿಲ್ಲಾ ಪೊಲೀಸ್ ಅಧೀಕ್ಷಕ ರೋಹನ್ ಜಗದೀಶ ಅವರ ಮಾರ್ಗದರ್ಶನ ಹಾಗೂ ಡಿವೈಎಸ್‌ಪಿ ಮುರ್ತುಜಾ ಖಾದ್ರಿ ಅವರ ಮೇಲ್ವಿಚಾರಣೆಯಲ್ಲಿ, ಶಿರಹಟ್ಟಿ ವೃತ್ತದ ಸಿಪಿಐ ಬಿ.ವಿ. ನ್ಯಾಮಗೌಡ ನೇತೃತ್ವದಲ್ಲಿ ಪಿಎಸ್‌ಐ ನಾಗರಾಜ ಗಡದ, ಅಪರಾಧ ವಿಭಾಗದ ಪಿಎಸ್‌ಐ ಟಿ.ಕೆ. ರಾಠೋಡ ಸೇರಿದಂತೆ ವಿಶೇಷ ತಂಡ ಕಾರ್ಯಾಚರಣೆ ನಡೆಸಿತು.

ಕಾರ್ಯಾಚರಣೆಯಲ್ಲಿ ಗೋವಾದಲ್ಲಿ ವಾಸವಾಗಿರುವ ಮೈನುದ್ದೀನ್ ತಂದೆ ಅಬ್ದುಲ್ ಅಜೀಂ ಕಿಲ್ಲೇದಾರ, ಒಬ್ಬ ಅಪ್ರಾಪ್ತ ಬಾಲಕ ಹಾಗೂ ಆಂಧ್ರಪ್ರದೇಶ ಮೂಲದ, ಹುಬ್ಬಳ್ಳಿಯಲ್ಲಿ ವಾಸವಾಗಿರುವ ತಮ್ಮಿಶೆಟ್ಟಿ ಲಕ್ಷ್ಮಿ ಅಲಿಯಾಸ್ ತಿರುಪತಮ್ಮ ಅವರನ್ನು ಬಂಧಿಸಲಾಗಿದೆ.

ಬಂಧಿತರಿಂದ 170 ಗ್ರಾಂ ಬೆಳ್ಳಿ ಆಭರಣ (ಅಂದಾಜು ಮೌಲ್ಯ ₹28 ಸಾವಿರ) ಹಾಗೂ ₹3.90 ಲಕ್ಷ ನಗದು ಸೇರಿದಂತೆ ಒಟ್ಟು ₹4.18 ಲಕ್ಷ ಮೌಲ್ಯದ ಆಸ್ತಿ ಜಪ್ತಿ ಮಾಡಲಾಗಿದೆ.

ಪೊಲೀಸ್ ತಂಡಕ್ಕೆ ಎಸ್‌ಪಿ ಶ್ಲಾಘನೆ

ಪ್ರಕರಣ ಭೇದಿಸುವಲ್ಲಿ ಯಶಸ್ವಿಯಾದ ಸಿಪಿಐ ಬಿ.ವಿ. ನ್ಯಾಮಗೌಡ, ಪಿಎಸ್‌ಐ ನಾಗರಾಜ ಗಡದ, ಪಿಎಸ್‌ಐ ಟಿ.ಕೆ. ರಾಠೋಡ, ಪ್ರೊಬೇಷನರಿ ಪಿಎಸ್‌ಐ ಸೂರ್ಯಕಾಂತ ಗುಗ್ಗರಿ, ಲಕ್ಷ್ಮೇಶ್ವರ ಠಾಣೆಯ ಸಿಬ್ಬಂದಿ ಹಾಗೂ ಗದಗ ಟೆಕ್ನಿಕಲ್ ಸೆಲ್‌ನ ಗುರು ಬೂದಿಹಾಳ ಮತ್ತು ಸಂಜು ಕೊರಡೂರ ಅವರ ಕಾರ್ಯವನ್ನು ಜಿಲ್ಲಾ ಪೊಲೀಸ್ ಅಧೀಕ್ಷಕ ರೋಹನ್ ಜಗದೀಶ ಶ್ಲಾಘಿಸಿದ್ದಾರೆ.