ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದವರ ವಿರುದ್ಧ ಪಕ್ಷ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿದೆ ಎಂದು ಮಾಜಿ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಡ್ಡ ಮತದಾನ ಮಾಡಿದವರನ್ನು ಪತ್ತೆಹಚ್ಚಲು ಧರ್ಮಸ್ಥಳದಲ್ಲಿ ಆಣೆ-ಪ್ರಮಾಣ ಮಾಡುವ ವಿಚಾರಕ್ಕೆ ಪ್ರತಿಕ್ರಿಯಿಸಿ, ಬಿಜೆಪಿಯಂತಹ ಶಿಸ್ತಿನ ಪಕ್ಷದಲ್ಲಿ ಅಡ್ಡ ಮತದಾನ ಮಾಡಿರುವುದು ಪಕ್ಷಕ್ಕೆ ಮಾಡಿದ ದ್ರೋಹ. ಇಂತಹ ಘಟನೆ ನಡೆಯಬಾರದು. ಇದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದು ಹೇಳಿದರು.
ಅಡ್ಡ ಮತದಾನದ ಬೆಳವಣಿಗೆಯಿಂದ ಪಕ್ಷದ ರಾಜ್ಯಾಧ್ಯಕ್ಷರು ವಿಚಲಿತರಾಗಿದ್ದಾರೆ. ಭಾವೋದ್ವೇಗದಲ್ಲಿ ಕೆಲವು ಹೇಳಿಕೆಗಳನ್ನು ನೀಡಿದ್ದಾರೆ. ಆದರೆ ಅಡ್ಡ ಮತದಾನ ಮಾಡಿದವರನ್ನು ಪತ್ತೆಹಚ್ಚಲು ಧರ್ಮಸ್ಥಳಕ್ಕೆ ಹೋಗುವ ಅಗತ್ಯವಿಲ್ಲ. ಬೇರೆ ಮಾರ್ಗಗಳ ಮೂಲಕ ಸತ್ಯಾಸತ್ಯತೆ ತಿಳಿದುಕೊಂಡು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.
ಅಡ್ಡ ಮತದಾನ ಮಾಡಿದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸಬಾರದು ಎಂದು ಹೇಳಿದ ಅವರು, ಈ ಕುರಿತು ಪರಿಶೀಲನೆ ನಡೆಸಲು ಈಗಾಗಲೇ ಸಮಿತಿ ರಚಿಸಲಾಗಿದೆ. ಸಮಿತಿಯ ವರದಿ ಬಂದ ಬಳಿಕ ಯಾರು ಅಡ್ಡ ಮತದಾನ ಮಾಡಿದ್ದಾರೆ ಎಂಬುದು ಸ್ಪಷ್ಟವಾಗಲಿದೆ. ಅದಕ್ಕೆ ಸ್ವಲ್ಪ ಸಮಯ ಬೇಕಾಗಬಹುದು ಎಂದರು.
ಪಕ್ಷ ಈ ವಿಚಾರವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಇದೇ ಕಾರಣಕ್ಕೆ ರಾಜ್ಯಾಧ್ಯಕ್ಷರು ಹಾಗೂ ಪ್ರತಿಪಕ್ಷ ನಾಯಕರನ್ನು ದೆಹಲಿಗೆ ಕರೆಯಲಾಗಿದೆ. ತನಿಖೆ ಪೂರ್ಣಗೊಂಡ ಬಳಿಕ ಅಡ್ಡ ಮತದಾನ ಮಾಡಿದವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವುದು ಖಚಿತ ಎಂದು ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.

