Home Blog

ಉಚಿತ ಭಾಗ್ಯಗಳು ರಾಜ್ಯಕ್ಕೆ ಹೊರೆಯಾಗುತ್ತಿವೆ: ಡಾ. ಮಲ್ಲಿಕಾರ್ಜುನ ವಿಶ್ವಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು

0

ವಿಜಯಸಾಕ್ಷಿ ಸುದ್ದಿ, ಗದಗ: ರಾಜ್ಯ ಸರ್ಕಾರದ ಉಚಿತ ಗ್ಯಾರಂಟಿ ಯೋಜನೆಗಳ ವಿರುದ್ಧ ಕಾಶೀ ಜಂಗಮವಾಡಿ ಮಠದ ಜಗದ್ಗುರು ಡಾ. ಮಲ್ಲಿಕಾರ್ಜುನ ವಿಶ್ವಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ತೀವ್ರ ಕಳವಳ ವ್ಯಕ್ತಪಡಿಸಿದ್ದು, “ಉಚಿತ ಗ್ಯಾರಂಟಿ ಭಾಗ್ಯಗಳನ್ನು ನಿಲ್ಲಿಸಿ, ರೈತರ ಬೆಳೆಗೆ ನ್ಯಾಯಯುತ ಬೆಲೆ ಹಾಗೂ ಯುವಕರಿಗೆ ಉದ್ಯೋಗ ನೀಡಿ. ರಾಜ್ಯದ ಅಭಿವೃದ್ಧಿಗೆ ಆದ್ಯತೆ ನೀಡಬೇಕು” ಎಂದು ಅಭಿಪ್ರಾಯಪಟ್ಟರು.

ನಗರದ ಮಾಂಗಲ್ಯ ಮಂದಿರದಲ್ಲಿ ಗದಗ-ಬೆಟಗೇರಿ ಪಂಚಾಚಾರ್ಯ ಸೇವಾ ಸಂಘ ಆಯೋಜಿಸಿದ್ದ ಆಷಾಢ ಮಾಸದ ‘ಶ್ರೀ ಸಿದ್ಧಾಂತ ಶಿಖಾಮಣಿ’ ಆಧ್ಯಾತ್ಮಿಕ ಪ್ರವಚನ ಮಾಲಿಕೆಯಲ್ಲಿ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

ಉಚಿತ ಯೋಜನೆಗಳಿಂದ ರಾಜ್ಯದ ಆರ್ಥಿಕ ಪರಿಸ್ಥಿತಿಯ ಮೇಲೆ ಭಾರೀ ಒತ್ತಡ ಉಂಟಾಗುತ್ತಿದೆ ಎಂದು ಹೇಳಿದ ಅವರು, “ಇಂದು ಕರ್ನಾಟಕದ ಮೇಲೆ ಲಕ್ಷಾಂತರ ಕೋಟಿ ರೂಪಾಯಿ ಸಾಲವಿದೆ. ಈ ಸಾಲ ತೀರಿಸಲು ತೆರಿಗೆ ಹಾಗೂ ವಿವಿಧ ಶುಲ್ಕಗಳನ್ನು ಹೆಚ್ಚಿಸುವ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಅದರ ಹೊರೆ ಅಂತಿಮವಾಗಿ ಜನರ ಮೇಲೇ ಬೀಳುತ್ತದೆ” ಎಂದು ಎಚ್ಚರಿಸಿದರು.

“ರೈತರಿಗೆ ಉಚಿತ ಯೋಜನೆಗಳ ಅಗತ್ಯವಿಲ್ಲ. ಅವರು ಬೆಳೆದ ಬೆಳೆಗೆ ನ್ಯಾಯಯುತ ಬೆಲೆ ಹಾಗೂ ಕೃಷಿ ಅಭಿವೃದ್ಧಿಗೆ ಅಗತ್ಯ ನೆರವು ನೀಡಿದರೆ ಸಾಕು. ಗ್ಯಾರಂಟಿ ಹಣದಿಂದ ಮನೆ ನಡೆಯುವುದಿಲ್ಲ. ಸರ್ಕಾರ ಉಚಿತ ಯೋಜನೆಗಳಿಗಿಂತ ಉದ್ಯೋಗ ಸೃಷ್ಟಿ ಹಾಗೂ ಅಭಿವೃದ್ಧಿ ಕಾಮಗಾರಿಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು” ಎಂದು ಹೇಳಿದರು.

ಮಳೆ ಕೊರತೆಯಿಂದ ರೈತರು ಸಂಕಷ್ಟದಲ್ಲಿದ್ದು, ವಿದ್ಯಾವಂತ ಯುವಕರು ಉದ್ಯೋಗವಿಲ್ಲದೆ ನಿರುದ್ಯೋಗಿಗಳಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ಮೂಲಭೂತ ಸಮಸ್ಯೆಗಳ ಪರಿಹಾರಕ್ಕೆ ಮುಂದಾಗಬೇಕು ಎಂದರು.

ಜನರ ಹಿತದೃಷ್ಟಿಯಿಂದ ಸರ್ಕಾರದ ತಪ್ಪು ನಿರ್ಧಾರಗಳ ಬಗ್ಗೆ ಮಾರ್ಗದರ್ಶನ ನೀಡುವುದು ಧರ್ಮಗುರುಗಳ ಜವಾಬ್ದಾರಿ ಎಂದು ಹೇಳಿದ ಶ್ರೀಗಳು, ಆಡಳಿತ ನಡೆಸುವ ಯಾವುದೇ ಪಕ್ಷ ಜನರ ಹಿತ ಕಾಪಾಡುವ ಕೆಲಸ ಮಾಡಬೇಕು. ಸರ್ಕಾರ ಸಾಲದ ಸುಳಿಗೆ ಸಿಲುಕದಂತೆ ಅಭಿವೃದ್ಧಿ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಿಗೆ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು.

ತಾವು ಮೂಲತಃ ರೈತನ ಮಗ ಎಂದು ಹೇಳಿದ ಶ್ರೀಗಳು, ಸೊಲ್ಲಾಪುರದ ಬೃಹನ್ಮಠಕ್ಕೆ ಸೇರಿದ ಸುಮಾರು 200 ಎಕರೆ ಜಮೀನಿನಲ್ಲಿ ಸ್ವತಃ ಕೃಷಿ ಕೆಲಸ ಮಾಡಿದ ಅನುಭವ ಹಂಚಿಕೊಂಡರು. “ಹೊಲದಲ್ಲಿ ದುಡಿದಾಗಲೇ ರೈತನ ಶ್ರಮದ ಅರಿವಾಗುತ್ತದೆ” ಎಂದು ಹೇಳಿದರು.

ರೈತರು ಏಕಬೆಳೆ ಪದ್ಧತಿಯನ್ನು ಅವಲಂಬಿಸದೆ ಬಹುಬೆಳೆ ಪದ್ಧತಿ ಹಾಗೂ ಮೌಲ್ಯವರ್ಧಿತ ಕೃಷಿಯತ್ತ ಗಮನ ಹರಿಸಬೇಕು ಎಂದು ಸಲಹೆ ನೀಡಿದರು.

ಸಂಸ್ಕಾರದ ಮಹತ್ವವನ್ನು ವಿವರಿಸಿದ ಅವರು, “ಕಾನೂನು ಎಲ್ಲರಿಗೂ ಸಮಾನವಾಗಿರಬೇಕು. ಪ್ರತಿಯೊಂದು ಕುಟುಂಬವೂ ಕನಿಷ್ಠ ಮೂರು ಮಕ್ಕಳನ್ನು ಹೊಂದಬೇಕು – ಒಂದು ಮನೆತನಕ್ಕೆ, ಒಂದು ದೇಶಕ್ಕೆ ಮತ್ತು ಒಂದು ಧರ್ಮ ರಕ್ಷಣೆಗೆ” ಎಂದು ಕರೆ ನೀಡಿದರು.

ಯುವಕರ ದೈಹಿಕ ಸಾಮರ್ಥ್ಯ ಕುಸಿಯುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ ಅವರು, ಸಮತೋಲನ ಆಹಾರ, ದೈಹಿಕ ಶ್ರಮ ಹಾಗೂ ದುಶ್ಚಟಗಳಿಂದ ದೂರವಿರುವ ಮೂಲಕ ಸದೃಢ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

“ಗ್ಯಾರಂಟಿ ಯೋಜನೆಗಳಿಂದ ಬದುಕು ಕಟ್ಟಲಾಗುವುದಿಲ್ಲ. ರೈತನ ಬೆಳೆಗೆ ನ್ಯಾಯಯುತ ಬೆಲೆ ನೀಡಿ, ಯುವಕರಿಗೆ ಉದ್ಯೋಗ ಕೊಡಿ. ಉಚಿತ ಭಾಗ್ಯಗಳಿಗಿಂತ ರಾಜ್ಯದ ಅಭಿವೃದ್ಧಿಗೆ ಆದ್ಯತೆ ನೀಡಬೇಕು.”

– ಡಾ. ಮಲ್ಲಿಕಾರ್ಜುನ ವಿಶ್ವಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು

ಶಿರಹಟ್ಟಿ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಆಗ್ರಹ

0
ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಶಿರಹಟ್ಟಿ ತಾಲೂಕನ್ನು ತಕ್ಷಣವೇ ಬರಪೀಡಿತ ತಾಲೂಕು ಎಂದು ಘೋಷಿಸಿ, ರೈತರಿಗೆ ವಿಶೇಷ ಪರಿಹಾರ, ಬೆಳೆ ವಿಮೆ, ಸಾಲಮನ್ನಾ ಹಾಗೂ ತುರ್ತು ನೆರವು ಒದಗಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಕಾರ್ಯಕರ್ತರು ಸೋಮವಾರ ತಹಶೀಲ್ದಾರರ ಮೂಲಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕರವೇ ಮುಖಂಡರು, ಮಳೆ ಕೊರತೆಯಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಸರ್ಕಾರ ಕೂಡಲೇ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ ರೈತರ ನೆರವಿಗೆ ಮುಂದಾಗಬೇಕು ಎಂದು ಒತ್ತಾಯಿಸಿದರು.
ಮನವಿ ಸಲ್ಲಿಸುವ ವೇಳೆ ಕರವೇ ತಾಲೂಕು ಅಧ್ಯಕ್ಷ ವೀರೇಶ ಪಸಾರದ, ಮುತ್ತುರಾಜ ಮುಂಡವಾಡ, ದೇವೇಂದ್ರ ಶಿಂಧೆ, ಇಮ್ರಾನ ಬಾವಿಕಟ್ಟಿ, ಸೊಹೈಲ್ ನದಾಫ್, ಮಂಜಣ್ಣ ದೇಸನಹಳ್ಳಿ, ತೌಶಿಫ ವಡ್ಡಟ್ಟಿ, ಮಲಿಕ್ ನಗಾರಿ, ಅನ್ವರ್ ಬರದ್ವಾಡ, ಮೋದಿನ್ ಪರೀಟ, ಇಮ್ರಾನ ಶಿಗ್ಲಿ, ಬುಡ್ಡೇಸಾಬ ಮುಳಗುಂದ, ಇಮಾಮ ಇಟಗಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಚರಂಡಿ ನೀರಿಗೆ ಮುಳುಗಿದ 150 ಎಕರೆ ಕೃಷಿಭೂಮಿ!

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಲಕ್ಷ್ಮೇಶ್ವರ ಪಟ್ಟಣದ ಚರಂಡಿ ನೀರು ಲಂಡಿಹಳ್ಳದ ಮೂಲಕ ಹರಿದು ಅಡರಕಟ್ಟಿ ಹಾಗೂ ಮಂಜಲಾಪುರ ಗ್ರಾಮದ ರೈತರ ಜಮೀನುಗಳಿಗೆ ನುಗ್ಗುತ್ತಿರುವ ಪರಿಣಾಮ ಸುಮಾರು 150 ಎಕರೆ ಫಲವತ್ತಾದ ಕೃಷಿಭೂಮಿ ಹಾನಿಗೊಳಗಾಗಿದ್ದು, 300ಕ್ಕೂ ಹೆಚ್ಚು ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆರೋಪಿಸಿ ರೈತರು ಸೋಮವಾರ ಪುರಸಭೆ ಮುಖ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಮನವಿ ಸಲ್ಲಿಸಿದ ಬಳಿಕ ಮಾತನಾಡಿದ ರೈತ ಮುಖಂಡ ಹಾಗೂ ವಕೀಲ ರವಿಕಾಂತ ಅಂಗಡಿ, ಪಟ್ಟಣದ ಕಲುಷಿತ ಚರಂಡಿ ನೀರು ಕೃಷಿ ಭೂಮಿಗೆ ಹರಿಯುತ್ತಿರುವುದರಿಂದ ಉಳುಮೆ ನಡೆಸಲು ಸಾಧ್ಯವಾಗುತ್ತಿಲ್ಲ. ರೈತರ ಜೀವನಾಧಾರವಾಗಿರುವ ಫಲವತ್ತಾದ ಭೂಮಿ ಹಾಳಾಗುತ್ತಿದ್ದು, ಜಿಲ್ಲಾಡಳಿತ ಹಾಗೂ ಸಂಬಂಧಿಸಿದ ಇಲಾಖೆ ಈ ಗಂಭೀರ ಸಮಸ್ಯೆಯನ್ನು ತುರ್ತಾಗಿ ಪರಿಗಣಿಸಿ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ಒಂದು ವಾರದೊಳಗೆ ಜಿಲ್ಲಾಧಿಕಾರಿಗಳು, ಸಂಬಂಧಪಟ್ಟ ಅಧಿಕಾರಿಗಳು ಹಾಗೂ ರೈತರೊಂದಿಗೆ ಸಭೆ ನಡೆಸಿ ಸಮಸ್ಯೆಗೆ ಸೂಕ್ತ ಪರಿಹಾರ ಕಂಡುಕೊಳ್ಳಬೇಕು. ಇಲ್ಲವಾದಲ್ಲಿ ಅಡರಕಟ್ಟಿ ಗ್ರಾಮದಿಂದ ಗದಗ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪಾದಯಾತ್ರೆ ನಡೆಸಿ, ರೈತರು ಸೇರಿ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕುವ ಮೂಲಕ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ರೈತ ಮುಖಂಡರಾದ ಮಂಜುನಾಥ ಮಾಗಡಿ, ಬಿ.ಟಿ. ಚಂದ್ರಶೇಖರ, ಬಸವರಾಜ ಹೀರೆಮನಿ, ಮುತ್ತಣ್ಣ ಗಡೆಪ್ಪನವರ, ಸಿದ್ದಣ್ಣ ಹವಳದ, ನಿಂಗಪ್ಪ ಪ್ಯಾಟಿ, ಚನ್ನಬಸಪ್ಪ ಹಳೆಮನಿ, ರಾಮಣ್ಣ ಚಿಕ್ಕಣ್ಣವರ, ಗಂಗನಗೌಡ್ರ ಪಾಟೀಲ, ಮಾಂತೇಶ ಹವಳದ, ಯಲ್ಲಪ್ಪ ರೊಳ್ಳಿ ಸೇರಿದಂತೆ ಅಡರಕಟ್ಟಿ ಹಾಗೂ ಮಂಜಲಾಪುರ ಗ್ರಾಮದ ರೈತರು ಉಪಸ್ಥಿತರಿದ್ದರು.

“ಒಂದು ವಾರದೊಳಗೆ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸದಿದ್ದರೆ ಅಡರಕಟ್ಟಿಯಿಂದ ಗದಗ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ ನಡೆಸಿ ಉಗ್ರ ಹೋರಾಟ ಹಮ್ಮಿಕೊಳ್ಳುತ್ತೇವೆ.”

– ರವಿಕಾಂತ ಅಂಗಡಿ, ರೈತ ಮುಖಂಡ ಹಾಗೂ ವಕೀಲ

ಗ್ರಾಮ ಬಿಟ್ಟು ಹೋದರೆ ಕ್ರಮ ಖಚಿತ!

0

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು (ಪಿಡಿಓ) ಹಾಗೂ ಗ್ರಾಮ ಆಡಳಿತ ಅಧಿಕಾರಿಗಳು (ವಿಎ) ಕಡ್ಡಾಯವಾಗಿ ತಮ್ಮ ಕೇಂದ್ರಸ್ಥಾನದಲ್ಲೇ ಕಾರ್ಯನಿರ್ವಹಿಸಬೇಕು. ಸರ್ಕಾರದ ಈ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಅಧಿಕಾರಿಗಳ ಚಲನವಲನದ ಮೇಲೆ ಪ್ರತಿದಿನ ನಿಗಾ ವಹಿಸಿ, ಜನರಿಗೆ ಅವರು ಲಭ್ಯವಾಗುವಂತೆ ನೋಡಿಕೊಳ್ಳಬೇಕು ಎಂದು ಶಾಸಕ ಡಾ. ಚಂದ್ರು ಲಮಾಣಿ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.

ಸೋಮವಾರ ಶಿರಹಟ್ಟಿಯ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಬರ ಪರಿಹಾರ ಮತ್ತು ವಿಪತ್ತು ನಿರ್ವಹಣಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ತಾಲೂಕು ಮಟ್ಟದ ಅಧಿಕಾರಿಗಳೂ ಕೇಂದ್ರಸ್ಥಾನದಲ್ಲಿಯೇ ಇರಬೇಕು. ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವ ಜವಾಬ್ದಾರಿ ಅಧಿಕಾರಿಗಳ ಮೇಲಿದೆ. ಗ್ರಾಮಗಳಲ್ಲಿ ಉದ್ಯೋಗವಿಲ್ಲದೆ ಜನರು ಗುಳೆ ಹೋಗುತ್ತಿರುವುದರಿಂದ, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಎಂಎನ್‌ಆರ್‌ಇಜಿಎ) ಕಾಮಗಾರಿಗಳನ್ನು ತಕ್ಷಣವೇ ಆರಂಭಿಸಬೇಕು ಎಂದು ಸೂಚಿಸಿದರು.

ಶಿರಹಟ್ಟಿ, ಲಕ್ಷ್ಮೇಶ್ವರ ಹಾಗೂ ಮುಂಡರಗಿ ತಾಲೂಕುಗಳಲ್ಲಿ ಶೇ.27ರಷ್ಟು ಮಳೆ ಕೊರತೆ ಉಂಟಾಗಿದ್ದು, ಇತ್ತೀಚೆಗೆ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪ್ರತಿ ರೈತರಿಗೆ ಕನಿಷ್ಠ ₹50 ಸಾವಿರ ಪರಿಹಾರ ನೀಡುವಂತೆ ಒತ್ತಾಯಿಸಲಾಗಿದೆ. ಅಲ್ಲದೆ, ಮುಖ್ಯಮಂತ್ರಿ ಘೋಷಿಸಿರುವ ₹1 ಕೋಟಿ ಪರಿಹಾರದ ಕ್ರಿಯಾ ಯೋಜನೆಯನ್ನು ಶೀಘ್ರ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ಗ್ರಾಮ ಪಂಚಾಯಿತಿಗಳ ಕಾರ್ಯವೈಖರಿ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಶಾಸಕ ಲಮಾಣಿ, ಪಿಡಿಓಗಳು ಪ್ರತಿದಿನ ಗ್ರಾಮ ಪಂಚಾಯಿತಿಯಲ್ಲಿ ಹಾಜರಿದ್ದು ಜಿಪಿಎಸ್ ಆಧಾರಿತ ಫೋಟೋ ಅಪ್‌ಲೋಡ್ ಮಾಡಬೇಕು. ಇದುವರೆಗೆ ಬಹುತೇಕ ಪಂಚಾಯಿತಿಗಳಲ್ಲಿ ಸಮರ್ಪಕ ಕ್ರಿಯಾ ಯೋಜನೆ ಸಿದ್ಧವಾಗಿಲ್ಲ. ಒಂದು ವಾರದೊಳಗೆ ಕ್ರಿಯಾ ಯೋಜನೆ ಪೂರ್ಣಗೊಳಿಸಿ ಗ್ರಾಮೀಣ ಪ್ರದೇಶಗಳಲ್ಲಿ ಕಾಮಗಾರಿಗಳನ್ನು ಆರಂಭಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಹಳೆಯ ಬಿಲ್‌ಗಳನ್ನು ನಿಯಮಾನುಸಾರ ಮಾಡದೇ ಇಚ್ಛೆ ಬಂದವರಿಗೆ ಬಿಲ್ ಪಾವತಿಸಿರುವ ಪ್ರಕರಣಗಳು ಗಮನಕ್ಕೆ ಬಂದಿವೆ. ಇಂತಹ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ವರದಿ ಸಲ್ಲಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಸಭೆಯಲ್ಲಿ ತಹಸೀಲ್ದಾರ್ ಕೆ. ರಾಘವೇಂದ್ರ ರಾವ್, ತಾಪಂ ಇಒ ಆರ್.ವಿ. ದೊಡ್ಡಮನಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು, ಪಿಡಿಓಗಳು ಉಪಸ್ಥಿತರಿದ್ದರು.

“ಪಿಡಿಓ ಹಾಗೂ ವಿಎಗಳು ಕಡ್ಡಾಯವಾಗಿ ಕೇಂದ್ರಸ್ಥಾನದಲ್ಲಿರಬೇಕು. ಒಂದು ವಾರದೊಳಗೆ ಉದ್ಯೋಗ ಖಾತರಿ ಕಾಮಗಾರಿಗಳು ಆರಂಭವಾಗಬೇಕು. ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಉಸ್ತುವಾರಿ ಸಚಿವರಿಗೆ ವರದಿ ಸಲ್ಲಿಸಲಾಗುವುದು.”

– ಡಾ. ಚಂದ್ರು ಲಮಾಣಿ, ಶಾಸಕ, ಶಿರಹಟ್ಟಿ

ಧರ್ಮದ ಹಾದಿಯಲ್ಲಿ ನಡೆದವರನ್ನು ಧರ್ಮವೇ ಕಾಪಾಡುತ್ತದೆ: ಅಡ್ನೂರ ಶ್ರೀ

0

ವಿಜಯಸಾಕ್ಷಿ ಸುದ್ದಿ, ಗದಗ: ಧರ್ಮವನ್ನು ರಕ್ಷಿಸುವವರನ್ನು ಧರ್ಮವೇ ರಕ್ಷಿಸುತ್ತದೆ. ಧರ್ಮದ ಹಾದಿಯಲ್ಲಿ ನಡೆಯುವವರ ದುಃಖಗಳು ಔಷಧಿಯಿಂದ ಶಮನವಾದಂತೆ ದೂರವಾಗುತ್ತವೆ. ಧರ್ಮಾಮೃತವನ್ನು ಪಾನ ಮಾಡಿದವರೇ ನಿಜವಾದ ಸುಖಿಗಳು ಎಂದು ಅಡ್ನೂರ ಬೃಹನ್ಮಠದ ಪೂಜ್ಯ ಅಭಿನವ ಪಂಚಾಕ್ಷರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ನಗರದ ಮಾಂಗಲ್ಯ ಮಂದಿರದಲ್ಲಿ ಗದಗ-ಬೆಟಗೇರಿ ಪಂಚಾಚಾರ್ಯ ಸೇವಾ ಸಂಘದ ಆಶ್ರಯದಲ್ಲಿ ನಡೆದ ‘ಸಿದ್ಧಾಂತ ಶಿಖಾಮಣಿ’ ಆಧ್ಯಾತ್ಮಿಕ ಪ್ರವಚನ ಮಾಲಿಕೆಯಲ್ಲಿ ನೇತೃತ್ವ ವಹಿಸಿ ಅವರು ಮಾತನಾಡಿದರು.

“ಧರ್ಮೋ ರಕ್ಷತಿ ರಕ್ಷಿತಃ” ಎಂಬುದು ಕೇವಲ ನುಡಿಯಲ್ಲ, ಬದುಕಿನ ಸತ್ಯ. ಧರ್ಮವೇ ಮನುಷ್ಯನ ಬದುಕಿನ ಶ್ರೇಷ್ಠ ಶಕ್ತಿಯಾಗಿದ್ದು, ದಯೆ, ಸತ್ಯ ಮತ್ತು ದಾನ ಮನುಷ್ಯನ ನಿಜವಾದ ಆಭರಣಗಳಾಗಿವೆ ಎಂದು ಹೇಳಿದರು.

ಶಿಬಿ ಚಕ್ರವರ್ತಿಯ ಧರ್ಮನಿಷ್ಠೆ, ದಾನವೀರ ಕರ್ಣನ ಉದಾರತೆಯನ್ನು ಉದಾಹರಿಸಿ ಮಾತನಾಡಿದ ಅವರು, ಸಕಲ ಜೀವಿಗಳಲ್ಲಿ ದಯೆ ತೋರುವುದು ನಿಜವಾದ ಧರ್ಮ. ಕೈಗಳಿಗೆ ಬಂಗಾರದ ಬಳೆಗಿಂತ ದಾನವೇ ಭೂಷಣ, ಕಂಠಕ್ಕೆ ಸತ್ಯವೇ ಭೂಷಣ ಹಾಗೂ ಕಿವಿಗಳಿಗೆ ಶಾಸ್ತ್ರಶ್ರವಣವೇ ಭೂಷಣ ಎಂದು ತಿಳಿಸಿದರು.

ಕಾಶಿ ಪೀಠದ ಜಗದ್ಗುರುಗಳ ನೇತೃತ್ವದಲ್ಲಿ ನಡೆಯುತ್ತಿರುವ ಸಂಗೀತಯುಕ್ತ ಇಷ್ಟಲಿಂಗ ಮಹಾಪೂಜೆ ಆತ್ಮಶುದ್ಧಿಗೆ ದಾರಿಯಾಗಿದ್ದು, ಆರು ದಿನಗಳ ಪ್ರವಚನ ಮತ್ತು ಪೂಜೆ ಮುಂದಿನ ವರ್ಷದವರೆಗೆ ಮನಸ್ಸಿಗೆ ಚೈತನ್ಯ ತುಂಬುವ ಆಧ್ಯಾತ್ಮಿಕ ಶಕ್ತಿಯಾಗಿದೆ ಎಂದು ಹೇಳಿದರು.

ನರೇಗಲ್ಲ ಹಿರೇಮಠದ ಪೂಜ್ಯ ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳ ಗಣ್ಯರನ್ನು ಕಾಶಿ ಜಗದ್ಗುರುಗಳು ಸನ್ಮಾನಿಸಿದರು. ಕಾರ್ಯಕ್ರಮದಲ್ಲಿ ಮಠಾಧೀಶರು, ಪಂಚಾಚಾರ್ಯ ವೇದ ಆಗಮ ಸಂಸ್ಕೃತ ಪಾಠಶಾಲೆಯ ವಟುಗಳು, ಅಖಿಲ ಭಾರತ ವೀರಶೈವ ಮಹಾಸಭೆಯ ಪದಾಧಿಕಾರಿಗಳು ಹಾಗೂ ಅಪಾರ ಸಂಖ್ಯೆಯ ಭಕ್ತರು ಪಾಲ್ಗೊಂಡಿದ್ದರು.

ವಿಡಿಎಸ್ ಶಾಲೆಯಲ್ಲಿ ವೈವಿಧ್ಯಮಯ ‘ಅಂಬ್ರೆಲಾ ಡೇ’ ಆಚರಣೆ

0

ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಶತಮಾನೋತ್ಸವ ಆಚರಿಸಿರುವ ಹಾಗೂ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವಿದ್ಯಾದಾನ ಸಮಿತಿಯ ವಿಡಿಎಸ್ ಕ್ಲಾಸಿಕ್ ಆಂಗ್ಲ ಮಾಧ್ಯಮ ಸಿಬಿಎಸ್ಇ ಶಾಲೆಯಲ್ಲಿ ‘ಅಂಬ್ರೆಲಾ ಡೇ’ (ಮಾನ್ಸೂನ್ ಡೇ)ವನ್ನು ಸಂಭ್ರಮದಿಂದ ಆಚರಿಸಲಾಯಿತು.

1ರಿಂದ 5ನೇ ತರಗತಿಯ ವಿದ್ಯಾರ್ಥಿಗಳು ತಮ್ಮ ಛತ್ರಿಗಳನ್ನು ರಿಬ್ಬನ್, ಬಲೂನ್, ಮಿಂಚುಪಟ್ಟಿ ಹಾಗೂ ಬಣ್ಣಬಣ್ಣದ ಕಾಗದಗಳಿಂದ ಆಕರ್ಷಕವಾಗಿ ಅಲಂಕರಿಸಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಸಾಂಪ್ರದಾಯಿಕ ಉಡುಗೆ ತೊಟ್ಟ ಮಕ್ಕಳು ತುಂತುರು ಮಳೆಯ ನಡುವೆ ಛತ್ರಿಗಳನ್ನು ಹಿಡಿದು ‘ಮಳೆ ಬಿಲ್ಲೆ… ಮಳೆ ಬಿಲ್ಲೆ…’ ಹಾಡಿಗೆ ಹೆಜ್ಜೆ ಹಾಕಿ ಸಂಭ್ರಮಿಸಿದರು.

ಹಿರಿಯ ಶಿಕ್ಷಕಿ ರೇಣುಕಾ ವೆಂಕಟಾಪುರ ಮಾತನಾಡಿ, ಅಂಬ್ರೆಲಾದ ಉಪಯೋಗ, ಮಳೆಯ ಮಹತ್ವ ಹಾಗೂ ಭೂಮಿಯ ಮೇಲಿನ ಜೀವಸಂಕುಲಕ್ಕೆ ಮಳೆಯಿಂದಾಗುವ ಪ್ರಯೋಜನಗಳ ಬಗ್ಗೆ ಮಕ್ಕಳಿಗೆ ಮಾಹಿತಿ ನೀಡಿದರು.

ಶಿಕ್ಷಕಿಯರಾದ ಮಂಜುಳಾ ಪರಾಪುರ ಮತ್ತು ಐಶ್ವರ್ಯ ಕುಲಕರ್ಣಿ ಮಕ್ಕಳಿಗೆ ನೃತ್ಯ ತರಬೇತಿ ನೀಡಿ, ಅವರೊಂದಿಗೆ ಸಂಭ್ರಮದಲ್ಲಿ ಭಾಗಿಯಾದರು.

ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕ-ಶಿಕ್ಷಕಿಯರು, ಸೇವಾ ತರಬೇತಿ ಪ್ರಶಿಕ್ಷಣಾರ್ಥಿಗಳು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಮಾಲಿನ್ಯ ಮುಕ್ತ ಭಾರತದತ್ತ ದಿಟ್ಟ ಹೆಜ್ಜೆ: ವಿಜಯಕುಮಾರ ಗಡ್ಡಿ

0

ವಿಜಯಸಾಕ್ಷಿ ಸುದ್ದಿ, ಗದಗ: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕೇಂದ್ರ ಸರ್ಕಾರ ಪರಿಸರ ಸಂರಕ್ಷಣೆ ಹಾಗೂ ಮಾಲಿನ್ಯ ನಿಯಂತ್ರಣಕ್ಕೆ ಕೈಗೊಂಡಿರುವ ದೂರದೃಷ್ಟಿಯ ಯೋಜನೆಗಳು ಜಗತ್ತಿಗೆ ಮಾದರಿಯಾಗಿವೆ ಎಂದು ಬಿಜೆಪಿ ಮುಖಂಡ ಹಾಗೂ ಉದ್ಯಮಿ ವಿಜಯಕುಮಾರ ಗಡ್ಡಿ ಹೇಳಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ದೇಶದ ಮೊದಲ ಹೈಡ್ರೋಜನ್ ಚಾಲಿತ ರೈಲ್ವೆ ಎಂಜಿನ್ ಉದ್ಘಾಟನೆಯು ಪರಿಸರ ಸ್ನೇಹಿ ತಂತ್ರಜ್ಞಾನದತ್ತ ಭಾರತ ಇಟ್ಟಿರುವ ಮಹತ್ವದ ಹೆಜ್ಜೆಯಾಗಿದೆ. ಈ ರೈಲು ಹಾನಿಕಾರಕ ಅನಿಲ ಹೊರಸೂಸದೆ ಕೇವಲ ನೀರಿನ ಆವಿಯನ್ನು ಹೊರಸೂಸುತ್ತದೆ ಎಂದು ತಿಳಿಸಿದ್ದಾರೆ.

ಭಾರತೀಯ ರೈಲ್ವೆಯ ಬಹುತೇಕ ಬ್ರಾಡ್‌ಗೇಜ್ ಮಾರ್ಗಗಳನ್ನು ವಿದ್ಯುದೀಕರಣಗೊಳಿಸಲಾಗಿದ್ದು, ರೈಲು ನಿಲ್ದಾಣಗಳಲ್ಲಿ ಸೌರ ಫಲಕ ಅಳವಡಿಸುವ ಮೂಲಕ ಹಸಿರು ಇಂಧನ ಬಳಕೆಗೆ ಉತ್ತೇಜನ ನೀಡಲಾಗಿದೆ. 130ಕ್ಕೂ ಹೆಚ್ಚು ನಗರಗಳಲ್ಲಿ ವಾಯು ಮಾಲಿನ್ಯ ಕಡಿಮೆ ಮಾಡಲು ಕ್ರಮ ಕೈಗೊಳ್ಳಲಾಗಿದ್ದು, ಕೈಗಾರಿಕೆಗಳ ಮೇಲಿನ ಪರಿಸರ ನಿಯಂತ್ರಣವನ್ನು ಕಟ್ಟುನಿಟ್ಟುಗೊಳಿಸಲಾಗಿದೆ ಎಂದು ಹೇಳಿದ್ದಾರೆ.

ಒಂದು ಕೋಟಿ ಮನೆಗಳ ಮೇಲ್ಛಾವಣಿಯಲ್ಲಿ ಸೌರ ಫಲಕ ಅಳವಡಿಕೆಗೆ ಆರ್ಥಿಕ ನೆರವು, ನಗರ ಪ್ರದೇಶಗಳಲ್ಲಿ 1,000 ನಗರ ಅರಣ್ಯಗಳ ಅಭಿವೃದ್ಧಿ ಸೇರಿದಂತೆ ಹಲವು ಯೋಜನೆಗಳನ್ನು ಕೇಂದ್ರ ಸರ್ಕಾರ ಅನುಷ್ಠಾನಗೊಳಿಸುತ್ತಿದೆ. ಈ ಯೋಜನೆಗಳು ದೇಶವನ್ನು ಪರಿಸರ ಸ್ನೇಹಿ ಅಭಿವೃದ್ಧಿಯತ್ತ ಕೊಂಡೊಯ್ಯಲಿವೆ ಎಂದು ವಿಜಯಕುಮಾರ ಗಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬಿ.ಕಾಂ ಪರೀಕ್ಷೆಯಲ್ಲಿ ಎಎಸ್‌ಎಸ್ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ

0

ವಿಜಯಸಾಕ್ಷಿ ಸುದ್ದಿ, ಗದಗ: ಗದಗ-ಬೆಟಗೇರಿಯ ಆದರ್ಶ ಶಿಕ್ಷಣ ಸಮಿತಿಯ ಎಎಸ್‌ಎಸ್ ವಾಣಿಜ್ಯ ಮಹಾವಿದ್ಯಾಲಯ 2025-26ನೇ ಶೈಕ್ಷಣಿಕ ವರ್ಷದ ಬಿ.ಕಾಂ 6ನೇ ಸೆಮಿಸ್ಟರ್ ಪರೀಕ್ಷೆಯಲ್ಲಿ ಶೇ.84.13ರಷ್ಟು ಉತ್ತೀರ್ಣತೆ ಸಾಧಿಸಿ ಗಮನಾರ್ಹ ಫಲಿತಾಂಶ ದಾಖಲಿಸಿದೆ.

ಒಟ್ಟು ಫಲಿತಾಂಶದಲ್ಲಿ 73 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 18 ವಿದ್ಯಾರ್ಥಿಗಳು ಪ್ರಥಮ ದರ್ಜೆ ಹಾಗೂ 15 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ.

ಪರೀಕ್ಷೆಯಲ್ಲಿ ಸೌಮ್ಯ ಮಿಸ್ಕಿನ್ ಹಾಗೂ ವರ್ಷಾ ಕುಂಬಾರ ತಲಾ ಶೇ.97.71 ಅಂಕ ಗಳಿಸಿ ಕಾಲೇಜಿಗೆ ಜಂಟಿ ಪ್ರಥಮ ಸ್ಥಾನ ಪಡೆದಿದ್ದಾರೆ. ವಿನುತಾ ರಾಯಬಾಗಿ ಶೇ.96.29 ಅಂಕ ಗಳಿಸಿ ದ್ವಿತೀಯ ಸ್ಥಾನ ಹಾಗೂ ರೇಣುಕಾ ಕಾಮೋಜಿ ಶೇ.95.86 ಅಂಕ ಗಳಿಸಿ ತೃತೀಯ ಸ್ಥಾನ ಪಡೆದು ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ.

ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರು, ಪ್ರಾಚಾರ್ಯರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದು, ಅವರ ಮುಂದಿನ ಉನ್ನತ ಶಿಕ್ಷಣ ಮತ್ತು ವೃತ್ತಿ ಜೀವನಕ್ಕೆ ಶುಭ ಹಾರೈಸಿದ್ದಾರೆ.

ಸದ್ದಿಲ್ಲದೆ ಲೋಡ್ ಶೆಡ್ಡಿಂಗ್: ಪದೇ ಪದೇ ವಿದ್ಯುತ್ ಕಡಿತ!

0

ವಿಜಯಸಾಕ್ಷಿ ಸುದ್ದಿ, ನರೇಗಲ್ಲ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹ ಜ್ಯೋತಿ ಯೋಜನೆ ಜಾರಿಯಲ್ಲಿದ್ದರೂ, ಗದಗ ಜಿಲ್ಲೆಯ ನರೇಗಲ್ಲ ಹೋಬಳಿಯ ಹಲವು ಗ್ರಾಮಗಳಲ್ಲಿ ಬೆಳಗ್ಗೆ ಮತ್ತು ಸಂಜೆ ಪದೇ ಪದೇ ವಿದ್ಯುತ್ ಕಡಿತವಾಗುತ್ತಿರುವುದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಗ್ರಾಮಸ್ಥರ ಆರೋಪದಂತೆ, ಪ್ರತಿದಿನ ಬೆಳಗ್ಗೆ 6ರಿಂದ 7.40ರವರೆಗೆ ಮನೆಗಳಿಗೆ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳುತ್ತಿದೆ. ಇದೇ ವೇಳೆ ಕೃಷಿ ಪಂಪ್‌ಸೆಟ್‌ಗಳಿಗೆ ತ್ರಿಫೇಸ್ ವಿದ್ಯುತ್ ನೀಡಲಾಗುತ್ತಿದ್ದು, ಮನೆಗಳನ್ನು ಕತ್ತಲಲ್ಲಿ ಬಿಡಲಾಗುತ್ತಿದೆ ಎನ್ನುವುದು ಅವರ ಆರೋಪ. ಸಂಜೆ ವೇಳೆಯಲ್ಲೂ ವಿದ್ಯುತ್ ಕಡಿತವಾಗುತ್ತಿರುವುದರಿಂದ ಕುಡಿಯುವ ನೀರಿನ ಸಮಸ್ಯೆ, ಮಕ್ಕಳ ಓದು, ಮನೆ ಕೆಲಸ ಹಾಗೂ ಸಣ್ಣ ವ್ಯಾಪಾರಗಳ ಮೇಲೆ ಪರಿಣಾಮ ಬೀರುತ್ತಿದೆ.

ಮಳೆಗಾಲದಲ್ಲಿ ಸಂಜೆ ವಿದ್ಯುತ್ ಇಲ್ಲದ ಕಾರಣ ಫ್ಯಾನ್‌ಗಳು ಸ್ಥಗಿತಗೊಂಡು ಸೊಳ್ಳೆಗಳ ಕಾಟ ಹೆಚ್ಚಾಗಿದೆ. ಮಕ್ಕಳು, ವೃದ್ಧರು ಹಾಗೂ ಅನಾರೋಗ್ಯ ಪೀಡಿತರು ರಾತ್ರಿ ನಿದ್ದೆಯಿಲ್ಲದೆ ಪರದಾಡುವಂತಾಗಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.

ರೈತರಿಗೆ ಗುಣಮಟ್ಟದ ವಿದ್ಯುತ್ ಪೂರೈಸುವುದು ಅಗತ್ಯವಾದರೂ, ಅದಕ್ಕಾಗಿ ಗೃಹ ಬಳಕೆಯ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸುವುದು ಸರಿಯಲ್ಲ. ಕೃಷಿ ಹಾಗೂ ಗೃಹ ಬಳಕೆಯ ವಿದ್ಯುತ್ ಪೂರೈಕೆಯ ನಡುವೆ ಸಮತೋಲನ ಸಾಧಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಹೆಸ್ಕಾಂ ಅಧಿಕಾರಿಗಳು ವಿದ್ಯುತ್ ಕಡಿತದ ಬಗ್ಗೆ ಮುಂಚಿತವಾಗಿ ಮಾಹಿತಿ ನೀಡುವುದರ ಜೊತೆಗೆ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಬೆಳೆ ವೀಕ್ಷಿಸಿ ರೈತರೊಂದಿಗೆ ಸಂವಾದ ನಡೆಸಿದ ಡಿಸಿ

0

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಮುಂಗಾರು ಮಳೆ ಕೊರತೆಯಿಂದ ಸಂಕಷ್ಟಕ್ಕೀಡಾಗಿರುವ ರೈತರ ನೆರವಿಗೆ ಜಿಲ್ಲಾಡಳಿತ ಮುಂದಾಗಿದ್ದು, ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರು ಶನಿವಾರ ಶಿರಹಟ್ಟಿ ತಾಲೂಕಿನ ಛಬ್ಬಿ ಹಾಗೂ ಬೆಳ್ಳಟ್ಟಿ ಗ್ರಾಮಗಳಿಗೆ ಭೇಟಿ ನೀಡಿ ಹೊಲಗಳಲ್ಲಿ ಬೆಳೆಗಳ ಸ್ಥಿತಿಗತಿ ಪರಿಶೀಲಿಸಿದರು.

ಹೆಸರು, ಮೆಕ್ಕೆಜೋಳ ಹಾಗೂ ಶೇಂಗಾ ಬೆಳೆದ ಜಮೀನುಗಳಲ್ಲಿ ಮಳೆ ಕೊರತೆಯಿಂದ ಒಣಗುತ್ತಿರುವ ಬೆಳೆಗಳನ್ನು ವೀಕ್ಷಿಸಿದ ಅವರು, ರೈತರೊಂದಿಗೆ ನೇರವಾಗಿ ಸಂವಾದ ನಡೆಸಿ ಸಮಸ್ಯೆಗಳ ಕುರಿತು ಮಾಹಿತಿ ಪಡೆದು ಧೈರ್ಯ ತುಂಬಿದರು.

ರೈತರು ಬೆಳೆ ಸಮೀಕ್ಷೆ ಆ್ಯಪ್ ಮೂಲಕ ಬೆಳೆ ವಿವರಗಳನ್ನು ಕಡ್ಡಾಯವಾಗಿ ದಾಖಲಿಸಬೇಕು. ಇದರಿಂದ ಬೆಳೆ ಬಿತ್ತನೆ ಪ್ರದೇಶದ ನಿಖರ ಮಾಹಿತಿ ಸರ್ಕಾರಕ್ಕೆ ಲಭ್ಯವಾಗಲಿದೆ ಎಂದು ತಿಳಿಸಿದರು.

ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಬೆಳೆ ಸಾಲ ಪಡೆದ ರೈತರು ಹೆಸರು ಹಾಗೂ ಹತ್ತಿ ಬೆಳೆಗಳಿಗೆ ಜು.22ರೊಳಗೆ ಬೆಳೆ ವಿಮೆ ನೋಂದಣಿ ಮಾಡಿಸಿಕೊಳ್ಳುವಂತೆ ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಜಂಟಿ ಕೃಷಿ ನಿರ್ದೇಶಕಿ ಚೇತನಾ ಪಾಟೀಲ, ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಚಿದಾನಂದಪ್ಪ, ತಹಸೀಲ್ದಾರ್ ಕೆ. ರಾಘವೇಂದ್ರರಾವ್, ಸಹಾಯಕ ಕೃಷಿ ನಿರ್ದೇಶಕ ಶಿವಕುಮಾರ ಕಾಶಪ್ಪನವರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ರೈತರು ಉಪಸ್ಥಿತರಿದ್ದರು.