ಬೆಂಗಳೂರು: ಕರ್ನಾಟಕ, ಆಂಧ್ರಪ್ರದೇಶ ಹಾಗೂ ತಮಿಳುನಾಡು ರಾಜ್ಯಗಳಲ್ಲಿ ನಕಲಿ ತೆರಿಗೆ ರಸೀದಿಗಳನ್ನು ಸೃಷ್ಟಿಸಿ ಕೋಟ್ಯಂತರ ರೂಪಾಯಿ ವಂಚನೆ ನಡೆಸುತ್ತಿದ್ದ ದೊಡ್ಡ ಜಾಲವನ್ನು ದಕ್ಷಿಣ ವಲಯ ವಾಣಿಜ್ಯ ತೆರಿಗೆ ಇಲಾಖೆಯ ಜಾರಿ ವಿಭಾಗದ ಅಧಿಕಾರಿಗಳು ಭೇದಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತೌಕೀರ್ ಅಲಿಯಾಸ್ ಮೊಹಮ್ಮದ್ (42) ಎಂಬ ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತನನ್ನು ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ತನಿಖೆಯಲ್ಲಿ, ಆರೋಪಿ ಇತರೆ ಸಹಚರರೊಂದಿಗೆ ಸೇರಿ ನಕಲಿ ಸಂಸ್ಥೆಗಳನ್ನು ಸ್ಥಾಪಿಸಿ, ನಕಲಿ ತೆರಿಗೆ ರಸೀದಿಗಳನ್ನು ಸೃಷ್ಟಿಸುವ ಮೂಲಕ ವಂಚನೆ ನಡೆಸುತ್ತಿದ್ದುದಾಗಿ ಬಹಿರಂಗವಾಗಿದೆ. ಈ ಜಾಲವು ಒಟ್ಟು ಸುಮಾರು 410 ಕೋಟಿ ರೂಪಾಯಿ ವಂಚನೆ ನಡೆಸಿರುವುದು ಅಧಿಕಾರಿಗಳ ಪರಿಶೀಲನೆಯಲ್ಲಿ ಬೆಳಕಿಗೆ ಬಂದಿದೆ.
ಆರೋಪಿಗಳು ಮೂರು ರಾಜ್ಯಗಳಲ್ಲಿ ಹತ್ತಾರು ನಕಲಿ ವ್ಯಾಪಾರ ಸಂಸ್ಥೆಗಳನ್ನು ತೆರೆಯಲಾಗಿದ್ದು, ಯಾವುದೇ ವಸ್ತುಗಳ ಸರಬರಾಜು ಮಾಡದೇ ಕೇವಲ ನಕಲಿ ಬಿಲ್ಗಳನ್ನು ಸೃಷ್ಟಿಸಿ, ಗುತ್ತಿಗೆದಾರರು ಹಾಗೂ ವ್ಯಾಪಾರಿಗಳಿಗೆ ನೀಡುತ್ತಿದ್ದರು. ಇದರ ಮೂಲಕ ಸರ್ಕಾರದ ಖಜಾನೆಗೆ ಕೋಟ್ಯಂತರ ರೂಪಾಯಿ ನಷ್ಟ ಉಂಟುಮಾಡಲಾಗುತ್ತಿತ್ತು.
ಬಂಧಿತನ ವಿಚಾರಣೆಯಲ್ಲಿ 410 ಕೋಟಿ ರೂಪಾಯಿ ವಂಚನೆಯ ಪೈಕಿ ಸುಮಾರು 102.5 ಕೋಟಿ ರೂಪಾಯಿ ನಕಲಿ ಇನ್ಪುಟ್ ತೆರಿಗೆ ಕ್ರೆಡಿಟ್ (ITC) ಆಗಿರುವುದು ಪತ್ತೆಯಾಗಿದೆ.

