Home Blog

ಮದ್ದೂರು ಗಣೇಶೋತ್ಸವ: 10 ಸಾವಿರಕ್ಕೂ ಹೆಚ್ಚು ಜನರ ನಿರೀಕ್ಷೆ, ರಾಜಕೀಯ ಶಕ್ತಿ ಪ್ರದರ್ಶನಕ್ಕೆ ದೋಸ್ತಿ ಸಜ್ಜು

0

ಮಂಡ್ಯ: ಮದ್ದೂರಿನಲ್ಲಿ ಈ ಬಾರಿ ಗಣೇಶೋತ್ಸವಕ್ಕೆ ಬಿಜೆಪಿ-ಜೆಡಿಎಸ್ ಮೈತ್ರಿ ನಾಯಕರು ಬೃಹತ್ ರೂಪ ನೀಡಿದ್ದು, 108 ಗಣೇಶ ಮೂರ್ತಿಗಳ ಸಾಮೂಹಿಕ ವಿಸರ್ಜನೆಗೆ ಸಿದ್ಧತೆ ನಡೆದಿದೆ. ಸೆ.16ರಂದು ನಡೆಯಲಿರುವ ಮೆರವಣಿಗೆಯಲ್ಲಿ 10 ಸಾವಿರಕ್ಕೂ ಅಧಿಕ ಭಕ್ತರು ಹಾಗೂ ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆಯಿದ್ದು, ಕಳೆದ ವರ್ಷದ ಕಲ್ಲು ತೂರಾಟದ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ ಕೈಗೊಂಡಿದೆ.

ಮದ್ದೂರು ಪಟ್ಟಣ ಮತ್ತು ಸುತ್ತಮುತ್ತಲಿನ ಬಡಾವಣೆಗಳು ಹಾಗೂ ಗ್ರಾಮಗಳಲ್ಲಿ ಪ್ರತಿಷ್ಠಾಪಿಸಲಾಗಿರುವ ಗಣೇಶ ಮೂರ್ತಿಗಳನ್ನು ಒಂದೆಡೆ ಸೇರಿಸಿ ಸಾಮೂಹಿಕವಾಗಿ ವಿಸರ್ಜನೆ ಮಾಡಲಾಗುತ್ತದೆ. ಇದಕ್ಕೂ ಮುನ್ನ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಅದ್ದೂರಿ ಮೆರವಣಿಗೆ ನಡೆಯಲಿದೆ. ಕಾರ್ಯಕ್ರಮದಲ್ಲಿ ಬಿಜೆಪಿ ಮತ್ತು ಜೆಡಿಎಸ್‌ನ ಪ್ರಮುಖ ನಾಯಕರು ಭಾಗವಹಿಸಲಿದ್ದು, ಮೈತ್ರಿ ಪಕ್ಷಗಳ ರಾಜಕೀಯ ಶಕ್ತಿ ಪ್ರದರ್ಶನಕ್ಕೂ ವೇದಿಕೆಯಾಗಲಿದೆ.

ವಿಪಕ್ಷ ನಾಯಕ ಆರ್. ಅಶೋಕ್, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಎರಡೂ ಪಕ್ಷಗಳ ಹಲವು ಶಾಸಕರು ಹಾಗೂ ಮಾಜಿ ಜನಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.

ಕಳೆದ ವರ್ಷ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ರಾಮ್ ರಹೀಂ ನಗರ ಪ್ರದೇಶದಲ್ಲಿ ಮಸೀದಿಯೊಂದರ ಮುಂಭಾಗ ಧ್ವನಿವರ್ಧಕ ಮತ್ತು ನೃತ್ಯದ ವಿಚಾರವಾಗಿ ಎರಡು ಗುಂಪುಗಳ ನಡುವೆ ವಾಗ್ವಾದ ನಡೆದಿತ್ತು. ಬಳಿಕ ಕಿಡಿಗೇಡಿಗಳು ಮೆರವಣಿಗೆಯತ್ತ ಕಲ್ಲು ಹಾಗೂ ಬಾಟಲಿಗಳನ್ನು ಎಸೆದಿದ್ದರು ಎನ್ನಲಾಗಿದ್ದು, ಹಲವು ಭಕ್ತರು ಗಾಯಗೊಂಡಿದ್ದರು. ಘಟನೆಯಿಂದ ಮದ್ದೂರಿನಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು.

ಇದಾದ ಬಳಿಕ ಬಿಜೆಪಿ, ಜೆಡಿಎಸ್ ಹಾಗೂ ಹಿಂದೂ ಸಂಘಟನೆಗಳು ಮದ್ದೂರು ಬಂದ್‌ಗೆ ಕರೆ ನೀಡಿದ್ದವು. ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ತಡೆದು ತಹಸೀಲ್ದಾರ್ ಕಚೇರಿ ಎದುರು ಧರಣಿ ನಡೆಸಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ 20ಕ್ಕೂ ಹೆಚ್ಚು ಆರೋಪಿಗಳನ್ನು ಬಂಧಿಸಿದ್ದರು.

ಘಟನೆಯ ನಂತರ ಮುನ್ನೆಚ್ಚರಿಕಾ ಕ್ರಮವಾಗಿ ಮದ್ದೂರು ಪಟ್ಟಣದಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಈ ಬಾರಿ ಮೆರವಣಿಗೆ ಮತ್ತು ಸಾಮೂಹಿಕ ವಿಸರ್ಜನೆ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮಂಡ್ಯ ಜಿಲ್ಲಾ ಪೊಲೀಸ್ ಇಲಾಖೆ ಹೆಚ್ಚುವರಿ ಪೊಲೀಸ್ ಸಿಬ್ಬಂದಿ ಹಾಗೂ ಕೆಎಸ್‌ಆರ್‌ಪಿ ಪಡೆಗಳೊಂದಿಗೆ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಿದೆ.

ವಂದೇ ಮಾತರಂ 2 ಚರಣಕ್ಕೆ ಸೀಮಿತಗೊಳಿಸಿದ ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ ರಿಟ್ ಅರ್ಜಿ

0

ಬೆಂಗಳೂರು: ವಂದೇ ಮಾತರಂ ಗೀತೆಯನ್ನು ಎರಡು ಚರಣಗಳಿಗೆ ಮಾತ್ರ ಸೀಮಿತಗೊಳಿಸಲು ರಾಜ್ಯ ಸರ್ಕಾರ ಕೈಗೊಂಡಿರುವ ನಿರ್ಧಾರವನ್ನು ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಲಾಗಿದೆ. ರಾಷ್ಟ್ರಗೀತೆಯ ಗಾಯನವನ್ನು ಕಡಿತಗೊಳಿಸುವ ಕಾನೂನು ವ್ಯಾಪ್ತಿ ರಾಜ್ಯ ಸರ್ಕಾರಕ್ಕಿಲ್ಲ ಎಂದು ವಕೀಲ ಗಿರೀಶ್ ಭಾರದ್ವಾಜ್ ಅರ್ಜಿಯಲ್ಲಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕಾಯ್ದೆಯ ಮೂಲಕ ಮಾಡಲಾಗದ ಕ್ರಮವನ್ನು ಸರ್ಕಾರ ಆದೇಶದ ಮೂಲಕ ಜಾರಿಗೆ ತರಲು ಮುಂದಾಗಿದೆ ಎಂದು ಅವರು ದೂರಿದ್ದಾರೆ.

ರಾಜ್ಯ ಸರ್ಕಾರ ಸೆಪ್ಟೆಂಬರ್ 8ರಂದು ಹೊರಡಿಸಿರುವ ಆದೇಶಕ್ಕೆ ತಡೆಯಾಜ್ಞೆ ನೀಡುವಂತೆ ಅರ್ಜಿಯಲ್ಲಿ ಮನವಿ ಮಾಡಲಾಗಿದೆ. ಸಚಿವ ಸಂಪುಟದ ನಿರ್ಣಯದ ಆಧಾರದ ಮೇಲೆ ಸರ್ಕಾರ ಈ ಆದೇಶ ಹೊರಡಿಸಿದ್ದು, ರಾಷ್ಟ್ರಪತಿ, ಉಪರಾಷ್ಟ್ರಪತಿ, ಪ್ರಧಾನಮಂತ್ರಿ ಹಾಗೂ ರಾಜ್ಯಪಾಲರ ಕಾರ್ಯಕ್ರಮಗಳನ್ನು ಹೊರತುಪಡಿಸಿ ಉಳಿದ ಸರ್ಕಾರಿ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಎರಡು ಚರಣಗಳನ್ನು ಮಾತ್ರ ಹಾಡಲು ಸೂಚಿಸಲಾಗಿದೆ.

ಭಾರತದ ರಾಷ್ಟ್ರೀಯ ಚಳವಳಿಯ ಸಂದರ್ಭದಲ್ಲಿ ಜನರಲ್ಲಿ ರಾಷ್ಟ್ರೀಯತೆ, ಏಕತೆ ಮತ್ತು ದೇಶಭಕ್ತಿಯ ಭಾವನೆ ಮೂಡಿಸುವಲ್ಲಿ ವಂದೇ ಮಾತರಂ ಗೀತೆಯು ಮಹತ್ವದ ಪಾತ್ರ ವಹಿಸಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ಭಾರತ ಸರ್ಕಾರದ ಗೃಹ ವ್ಯವಹಾರಗಳ ಸಚಿವಾಲಯವು ವಂದೇ ಮಾತರಂನ ಅಧಿಕೃತ ಆವೃತ್ತಿ ಹಾಗೂ ವಿವಿಧ ಸರ್ಕಾರಿ ಮತ್ತು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಅದರ ಗಾಯನ ಅಥವಾ ವಾದನಕ್ಕೆ ಸಂಬಂಧಿಸಿದ ಮಾರ್ಗಸೂಚಿಗಳನ್ನು ಹೊರಡಿಸಿದೆ. ಈ ಮಾರ್ಗಸೂಚಿಗಳಲ್ಲಿ ರಾಷ್ಟ್ರೀಯ ಗೀತೆಯ ವಾದನ ಮತ್ತು ಸಾಮೂಹಿಕ ಗಾಯನಕ್ಕೆ ಸಂಬಂಧಿಸಿದ ಸಂದರ್ಭಗಳನ್ನು ಪ್ರತ್ಯೇಕವಾಗಿ ನಿರ್ದಿಷ್ಟಪಡಿಸಲಾಗಿದೆ.

ರಾಜ್ಯದಲ್ಲಿ ನಡೆಯುವ ವಿವಿಧ ಸರ್ಕಾರಿ ಕಾರ್ಯಕ್ರಮಗಳು ಮತ್ತು ಸಮಾರಂಭಗಳ ಸ್ವರೂಪ ಹಾಗೂ ಸಂದರ್ಭಕ್ಕೆ ಅನುಗುಣವಾಗಿ ವಂದೇ ಮಾತರಂ ಗೀತೆಯ ವಾದನ ಅಥವಾ ಗಾಯನದಲ್ಲಿ ಏಕರೂಪತೆ, ಗೌರವ ಹಾಗೂ ಸೂಕ್ತ ಶಿಷ್ಟಾಚಾರವನ್ನು ಕಾಯ್ದುಕೊಳ್ಳುವ ಅಗತ್ಯವಿದೆ ಎಂದು ರಾಜ್ಯ ಸರ್ಕಾರ ತನ್ನ ಆದೇಶದಲ್ಲಿ ತಿಳಿಸಿತ್ತು.

ಬ್ರಿಕ್ಸ್ ಔತಣಕೂಟ ವಿವಾದ: ವಿಪಕ್ಷ ನಾಯಕರಿಗೆ ಆಹ್ವಾನ ನೀಡಿಲ್ಲವೆಂಬ ಆರೋಪಕ್ಕೆ ಸರ್ಕಾರದ ಸ್ಪಷ್ಟನೆ

0

ನವದೆಹಲಿ: ಭಾರತದ ಅಧ್ಯಕ್ಷತೆಯಲ್ಲಿ ಆಯೋಜಿಸಲಾದ ಬ್ರಿಕ್ಸ್ ಶೃಂಗಸಭೆಯ ಸಂದರ್ಭದಲ್ಲಿ ವಿದೇಶಿ ನಾಯಕರ ಗೌರವಾರ್ಥ ಕೇಂದ್ರ ಸರ್ಕಾರ ಆಯೋಜಿಸಿದ್ದ ಭವ್ಯ ಔತಣಕೂಟ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ಔತಣಕೂಟದಲ್ಲಿ ಎನ್‌ಡಿಎ ಮತ್ತು ಬಿಜೆಪಿ ಮಿತ್ರಪಕ್ಷಗಳ ಮುಖ್ಯಮಂತ್ರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಕಾಣಿಸಿಕೊಂಡಿದ್ದರಿಂದ, ಇದು ಆಡಳಿತ ಪಕ್ಷದ ಕಾರ್ಯಕ್ರಮದಂತೆ ಬಿಂಬಿತವಾಗಿದೆ ಎಂದು ವಿರೋಧ ಪಕ್ಷಗಳು ಟೀಕಿಸಿದ್ದವು. ಆದರೆ, ಈ ಆರೋಪವನ್ನು ತಳ್ಳಿಹಾಕಿರುವ ಅಧಿಕೃತ ಮೂಲಗಳು, ವಿರೋಧ ಪಕ್ಷಗಳ ಮುಖ್ಯಮಂತ್ರಿಗಳಿಗೂ ಔತಣಕೂಟಕ್ಕೆ ಅಧಿಕೃತ ಆಹ್ವಾನ ನೀಡಲಾಗಿತ್ತು. ಆದರೆ ಕೆಲವರು ಅನಿವಾರ್ಯ ಕಾರಣಗಳಿಂದ ಗೈರಾಗಿದ್ದಾರೆ ಎಂದು ಸ್ಪಷ್ಟಪಡಿಸಿವೆ.

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು ಸೆಪ್ಟೆಂಬರ್ 12ರಂದು ಔತಣಕೂಟದ ಆಹ್ವಾನವನ್ನು ಸ್ವೀಕರಿಸಿದ್ದರು. ಆದರೆ ಕೊನೆಯ ಕ್ಷಣದಲ್ಲಿ ಅನಿವಾರ್ಯ ಕಾರಣಗಳನ್ನು ಉಲ್ಲೇಖಿಸಿ ಕಾರ್ಯಕ್ರಮಕ್ಕೆ ಹಾಜರಾಗಲು ಸಾಧ್ಯವಾಗುವುದಿಲ್ಲ ಎಂದು ತಿಳಿಸಿದ್ದರು. ಕರ್ನಾಟಕ ಹಾಗೂ ಕೇರಳದ ಕಾಂಗ್ರೆಸ್ ಮುಖ್ಯಮಂತ್ರಿಗಳೂ ಔತಣಕೂಟದಿಂದ ದೂರ ಉಳಿದಿದ್ದರು ಎಂದು ಅಧಿಕೃತ ಮೂಲಗಳು ತಿಳಿಸಿವೆ.

ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರಿಗೆ ಆಹ್ವಾನ ನೀಡಲಾಗಿದ್ದರೂ, ಅವರು ವಿದೇಶ ಪ್ರವಾಸದಲ್ಲಿದ್ದ ಕಾರಣ ಔತಣಕೂಟದಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲ ಎಂದು ತಿಳಿದುಬಂದಿದೆ.

ಇದೇ ವೇಳೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಔತಣಕೂಟಕ್ಕೆ ಆಹ್ವಾನ ನೀಡದಿರುವುದನ್ನು ಕಾಂಗ್ರೆಸ್ ತೀವ್ರವಾಗಿ ಆಕ್ಷೇಪಿಸಿದೆ. ಕೇಂದ್ರ ಸರ್ಕಾರದ ರಾಜತಾಂತ್ರಿಕ ಧೋರಣೆಯನ್ನು ಕಾಂಗ್ರೆಸ್ ಪ್ರಶ್ನಿಸಿದೆ.

ಭಾರತದ ವಿವಿಧ ನಗರಗಳಲ್ಲಿ ಬ್ರಿಕ್ಸ್ ಸಭೆಗಳು ನಡೆದಿರುವ ಹಿನ್ನೆಲೆಯಲ್ಲಿ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳನ್ನು ಆಹ್ವಾನಿಸಲಾಗಿತ್ತು ಎಂದು ಸರ್ಕಾರದ ಮೂಲಗಳು ತಿಳಿಸಿವೆ. ರಾಷ್ಟ್ರೀಯ ಮಹತ್ವದ ಜಾಗತಿಕ ರಾಜತಾಂತ್ರಿಕ ಕಾರ್ಯಕ್ರಮದಿಂದ ವಿರೋಧ ಪಕ್ಷಗಳ ಮುಖಂಡರು ದೂರ ಉಳಿದಿರುವುದು ದುರದೃಷ್ಟಕರ ಎಂದೂ ಸರ್ಕಾರದ ಮೂಲಗಳು ಬೇಸರ ವ್ಯಕ್ತಪಡಿಸಿವೆ.

ಜಾಗತಿಕ ವೇದಿಕೆಯಲ್ಲಿ ಭಾರತದ ಸಾಂಸ್ಕೃತಿಕ ಹಾಗೂ ಆಡಳಿತಾತ್ಮಕ ಒಗ್ಗಟ್ಟನ್ನು ಪ್ರದರ್ಶಿಸುವ ಉದ್ದೇಶದಿಂದ ಎಲ್ಲಾ ರಾಜ್ಯಗಳ ನಾಯಕರನ್ನು ಒಟ್ಟಿಗೆ ಸೇರಿಸುವ ಪರಿಕಲ್ಪನೆಯೊಂದಿಗೆ ಆಹ್ವಾನ ನೀಡಲಾಗಿತ್ತು ಎಂದು ಮೂಲಗಳು ತಿಳಿಸಿವೆ. ಈ ನಡುವೆ ಪ್ರಮುಖ ರಾಷ್ಟ್ರೀಯ ಕಾರ್ಯಕ್ರಮಗಳನ್ನು ಕಾಂಗ್ರೆಸ್ ನಾಯಕರು ಉದ್ದೇಶಪೂರ್ವಕವಾಗಿ ಬಹಿಷ್ಕರಿಸುತ್ತಾರೆ ಎಂಬ ಬಿಜೆಪಿ ಆರೋಪವೂ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ.

ರಾಜ್ಯದಲ್ಲಿ ಭೀಕರ ಬರದ ಮುನ್ಸೂಚನೆ: ಕೇಂದ್ರದ ನಿಯಮದಂತೆ ಬರಪೀಡಿತ ತಾಲೂಕುಗಳ ಘೋಷಣೆ ಎಂದ ಡಿಕೆಶಿ

0

ರಾಮನಗರ: ರಾಜ್ಯದಲ್ಲಿ ಈ ಬಾರಿ ಭೀಕರ ಬರ ಪರಿಸ್ಥಿತಿ ಎದುರಾಗಿದ್ದು, 200ಕ್ಕೂ ಹೆಚ್ಚು ತಾಲೂಕುಗಳು ಬರದ ಬವಣೆಗೆ ಸಿಲುಕಿವೆ. ಕೇಂದ್ರದ ನಿಯಮಾನುಸಾರ ಬರಪೀಡಿತ ತಾಲೂಕುಗಳನ್ನು ಘೋಷಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರದಲ್ಲಿರುವ ನಿವಾಸದಲ್ಲಿ ಮಾತನಾಡಿದ ಅವರು, ರಾಜ್ಯದ ಜನತೆಗೆ ಸರ್ಕಾರದ ಪರವಾಗಿ ಹಾಗೂ ವೈಯಕ್ತಿಕವಾಗಿ ಗೌರಿ-ಗಣೇಶ ಹಬ್ಬದ ಶುಭಾಶಯಗಳನ್ನು ಕೋರಿದರು. ತಾವು ಹಲವು ಪ್ರದೇಶಗಳಿಗೆ ಭೇಟಿ ನೀಡಿ ಬರ ಪರಿಸ್ಥಿತಿಯನ್ನು ಪರಿಶೀಲಿಸಿದ್ದು, ಈಗಾಗಲೇ 102 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಉಳಿದ ತಾಲೂಕುಗಳಲ್ಲಿ ಪರಿಶೀಲನೆ ನಡೆಯುತ್ತಿದ್ದು, ಯಾರೂ ಆತುರಪಡುವ ಅಗತ್ಯವಿಲ್ಲ ಎಂದರು.

ಹಲವು ಕಡೆ ಬೆಳೆಗಳು ನಾಶವಾಗಿದ್ದು, ಅಂತರ್ಜಲ ಮಟ್ಟ ಕುಸಿದಿದೆ. ಅನೇಕ ಪ್ರದೇಶಗಳಲ್ಲಿ ಬೆಳೆ ಬೆಳೆಯಲು ಸಾಧ್ಯವಾಗಿಲ್ಲ. ಮುಂದಿನ ದಿನಗಳಲ್ಲಿ ಕುಡಿಯುವ ನೀರು ಹಾಗೂ ವಿದ್ಯುತ್ ಕೊರತೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಶಿವಕುಮಾರ್ ಹೇಳಿದರು.

ಕಳೆದ ವಾರ ವಿದ್ಯುತ್ ಬೇಡಿಕೆ 19 ಸಾವಿರಕ್ಕೂ ಹೆಚ್ಚು ಮೆಗಾವ್ಯಾಟ್‌ಗೆ ತಲುಪಿದ್ದು, ಪ್ರತಿ ಯೂನಿಟ್‌ಗೆ ₹11ರಿಂದ ₹12ರ ವರೆಗೆ ವಿದ್ಯುತ್ ಖರೀದಿಸಬೇಕಾದ ಅನಿವಾರ್ಯತೆ ಎದುರಾಗಿದೆ. ರಾತ್ರಿ ವೇಳೆ ವಿದ್ಯುತ್ ಬಳಕೆ ಹೆಚ್ಚಾಗಿದ್ದು, ನೆರೆ ರಾಜ್ಯಗಳೊಂದಿಗೆ ಚರ್ಚೆ ನಡೆಸುವಂತೆ ಸಚಿವರಿಗೆ ಸೂಚಿಸಲಾಗಿದೆ ಎಂದರು.

ರಾಜ್ಯದಲ್ಲಿ ಬಂಡವಾಳ ಹೂಡಿಕೆಗೆ ಹಲವು ಕಂಪನಿಗಳು ಬರುತ್ತಿದ್ದು, ವಿದ್ಯುತ್, ನೀರು ಹಾಗೂ ಭೂಮಿಗೆ ಬೇಡಿಕೆ ಇಟ್ಟಿವೆ. ವಿಘ್ನ ನಿವಾರಕ ಗಣೇಶನ ಹಬ್ಬದ ಸಂದರ್ಭದಲ್ಲಿ ಉತ್ತಮ ಮಳೆಯಾಗಲಿ ಎಂದು ಪ್ರಾರ್ಥಿಸಬೇಕಾಗಿದೆ. ಮುಂದಿನ ದಿನಗಳಲ್ಲಿ ಬರದ ಸಂಕಷ್ಟ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಬೆಲೆಗಳು ಏರಿಕೆಯಾಗುತ್ತಿದ್ದು, ಜಲ್ಲಿ ಬೆಲೆ ಶೇ.40ರಷ್ಟು ಹೆಚ್ಚಾಗಿರುವುದರಿಂದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ತೊಂದರೆಯಾಗುತ್ತಿದೆ ಎಂದು ತಿಳಿಸಿದರು.

ಸೆಪ್ಟೆಂಬರ್ 18ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಚಿವ ಸಂಪುಟ ಸಭೆ ನಡೆಯಲಿದೆ. ಆ ಭಾಗದ ಶಾಸಕರು ಹಾಗೂ ಸಚಿವರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದು, ಜನರು ಉದ್ಯೋಗಕ್ಕಾಗಿ ಹೊರಗೆ ತೆರಳುವುದನ್ನು ತಪ್ಪಿಸಿ, ಅಲ್ಲಿನ ಪ್ರಾಕೃತಿಕ ಸಂಪತ್ತನ್ನು ಬಳಸಿಕೊಂಡು ಸ್ಥಳೀಯರ ಬದುಕಿನಲ್ಲಿ ಬದಲಾವಣೆ ತರಲು ಹಲವು ಹೊಸ ಯೋಜನೆಗಳನ್ನು ಘೋಷಿಸಲಾಗುವುದು ಎಂದರು.

ಬರ ಪರಿಸ್ಥಿತಿ ನಿರ್ವಹಣೆಗೆ ಸರ್ಕಾರ ಸಿದ್ಧತೆ ನಡೆಸಿದ್ದು, ವಿದ್ಯುತ್ ಉತ್ಪಾದನೆ ಹೆಚ್ಚಿಸುವ ಕುರಿತು ಇಂಧನ ಸಚಿವರು ಹಾಗೂ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿರುವುದಾಗಿ ಹೇಳಿದರು. ‘ಒನ್ ನೇಷನ್, ಒನ್ ಗ್ರಿಡ್’ ವ್ಯವಸ್ಥೆಯಿಂದ ದೇಶದ ಯಾವುದೇ ಭಾಗದಲ್ಲಿ ಉತ್ಪಾದನೆಯಾಗುವ ವಿದ್ಯುತ್ ಅನ್ನು ರಾಜ್ಯಕ್ಕೆ ತರಬಹುದಾಗಿದ್ದು, ಇದಕ್ಕೆ ಸರಬರಾಜು ವೆಚ್ಚವಾಗಲಿದೆ ಎಂದು ವಿವರಿಸಿದರು.

ಬರ ಹಾಗೂ ರೈತರ ಸಮಸ್ಯೆಗಳು ಮತ್ತು ಕಸ್ತೂರಿ ರಂಗನ್ ವರದಿ ಕುರಿತು ಚರ್ಚಿಸಲು ಸೆಪ್ಟೆಂಬರ್ 21ರಿಂದ 23ರವರೆಗೆ ಮೂರು ದಿನಗಳ ವಿಶೇಷ ಅಧಿವೇಶನ ಕರೆಯಲಾಗಿದೆ. ಬಿಜೆಪಿ ಶಾಸಕರೂ ರೈತರ ಸಮಸ್ಯೆಗಳ ಬಗ್ಗೆ ತಮ್ಮ ನೋವು ಹಂಚಿಕೊಂಡಿದ್ದಾರೆ. ಬರ ಘೋಷಣೆ ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಶಿವಕುಮಾರ್ ಹೇಳಿದರು.

ಸರ್ಕಾರದ 100 ದಿನಗಳ ಕಾರ್ಯಕ್ರಮಕ್ಕೆ ವಿರೋಧ ಪಕ್ಷಗಳ ಶಾಸಕರು ಸೇರಿದಂತೆ ಎಲ್ಲರಿಗೂ ಆಹ್ವಾನ ನೀಡಲಾಗಿದೆ. ವೇದಿಕೆಯಲ್ಲಿ ಶಿಷ್ಟಾಚಾರ ಪಾಲಿಸಲಾಗುತ್ತದೆ. ಪಕ್ಷದ ಅಧ್ಯಕ್ಷರು ಸೇರಿದಂತೆ ಎಲ್ಲರೂ ಪಕ್ಷದೊಂದಿಗೆ ಸೇರಿಕೊಂಡೇ ಕೆಲಸ ಮಾಡುತ್ತಾರೆ ಎಂದು ಸ್ಪಷ್ಟಪಡಿಸಿದರು.

ಖಾಲಿ ಇರುವ ಸಚಿವ ಸ್ಥಾನವನ್ನು ಪಕ್ಷ ಸೂಚಿಸಿದಾಗ ಭರ್ತಿ ಮಾಡುವುದಾಗಿ ಮುಖ್ಯಮಂತ್ರಿ ತಿಳಿಸಿದರು. ಬಳಿಕ ದೊಡ್ಡಾಲಹಳ್ಳಿಯ ತಮ್ಮ ನಿವಾಸದಲ್ಲಿ ತಾಯಿ ಗೌರಮ್ಮ ಹಾಗೂ ಸಹೋದರ ಡಿ.ಕೆ. ಸುರೇಶ್ ಅವರೊಂದಿಗೆ ಮಾತುಕತೆ ನಡೆಸಿದರು. ಗಣೇಶ ಹಬ್ಬದ ಹಿನ್ನೆಲೆಯಲ್ಲಿ ತಮ್ಮ ಪೂರ್ವಜರ ಸಮಾಧಿಗಳಿಗೆ ವಾಡಿಕೆಯಂತೆ ಪೂಜೆ ಸಲ್ಲಿಸಿದರು. ಈ ವೇಳೆ ಪತ್ನಿ ಉಷಾ ಕೂಡ ಉಪಸ್ಥಿತರಿದ್ದರು.

ಭದ್ರಾ ಬಲದಂಡೆ ನಾಲೆಗೆ ನೀರು ಹರಿಸಲು ಆಗ್ರಹ; ಹೆದ್ದಾರಿ ತಡೆದು ರೈತರ ಪ್ರತಿಭಟನೆ!

0

ದಾವಣಗೆರೆ: ಭದ್ರಾ ಜಲಾಶಯದಿಂದ ಬಲದಂಡೆ ನಾಲೆಗೆ ನೀರು ಹರಿಸುವಂತೆ ಆಗ್ರಹಿಸಿ ಬಿಜೆಪಿ ಹಾಗೂ ರೈತ ಒಕ್ಕೂಟದ ವತಿಯಿಂದ ದಾವಣಗೆರೆ ಹೊರವಲಯದ ಬಾಡ ಕ್ರಾಸ್ ಬಳಿ ರಸ್ತೆ ತಡೆದು ಪ್ರತಿಭಟನೆ ನಡೆಸಲಾಗುತ್ತಿದೆ.

ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ನೇತೃತ್ವದಲ್ಲಿ ರೈತರು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಭದ್ರಾ ಜಲಾಶಯದಿಂದ ಅಪ್ಪರ್ ಭದ್ರಾ ಯೋಜನೆಗೆ ಮೂರು ಟಿಎಂಸಿ ನೀರು ಹರಿಸಿ, ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರಿಗೆ ಸರ್ಕಾರ ಅನ್ಯಾಯ ಮಾಡಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

ಮಳೆ ಕೊರತೆಯಿಂದ ತೋಟಗಾರಿಕಾ ಬೆಳೆಗಳು, ಇತರೆ ಬೆಳೆಗಳು ಹಾಗೂ ಭತ್ತ ಒಣಗುತ್ತಿವೆ. ಕೆರೆಗಳು ಬತ್ತಿದ್ದು, ಅಂತರ್ಜಲ ಮಟ್ಟವೂ ಕುಸಿಯುತ್ತಿದೆ. ಹೀಗಾಗಿ ಕೂಡಲೇ ಭದ್ರಾ ಬಲದಂಡೆ ನಾಲೆಗೆ ನೀರು ಹರಿಸಬೇಕು ಎಂದು ರೈತರು ಒತ್ತಾಯಿಸಿದ್ದಾರೆ.

ಈ ಕುರಿತು ಮಾತನಾಡಿರುವ ಎಂ.ಪಿ. ರೇಣುಕಾಚಾರ್ಯ, ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗಲೂ ಈ ಬಗ್ಗೆ ಮನವಿ ಮಾಡಲಾಗಿತ್ತು. ಡಿ.ಕೆ. ಶಿವಕುಮಾರ್ ನೀರಾವರಿ ಸಚಿವರಾಗಿದ್ದ ಸಂದರ್ಭದಲ್ಲಿಯೂ ಮನವಿ ಸಲ್ಲಿಸಲಾಗಿತ್ತು ಎಂದು ಹೇಳಿದ್ದಾರೆ.

ಈಗಲೇ ಸರ್ಕಾರ ಕ್ರಮ ಕೈಗೊಂಡು ಭದ್ರಾ ಬಲದಂಡೆ ನಾಲೆಗೆ ನೀರು ಹರಿಸದಿದ್ದರೆ, ಭದ್ರಾ ನೀರು ನಮ್ಮ ಕೈತಪ್ಪುವ ಆತಂಕವಿದೆ ಎಂದು ರೇಣುಕಾಚಾರ್ಯ ಹೇಳಿದ್ದಾರೆ. ರೈತರ ಹಿತದೃಷ್ಟಿಯಿಂದ ಕೂಡಲೇ ನೀರು ಹರಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

ಗಣೇಶ ಮೂರ್ತಿ ತರಲು ಹೋಗುತ್ತಿದ್ದಾಗ ಬೈಕ್ ಅಪಘಾತ; ಯುವಕ ಸಾವು!

0

ಕಲಬುರಗಿ: ಗಣೇಶನ ಮೂರ್ತಿ ತರಲು ಸ್ನೇಹಿತರೊಂದಿಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಸಂಭವಿಸಿದ ಅಪಘಾತದಲ್ಲಿ ಯುವಕನೊಬ್ಬ ಮೃತಪಟ್ಟಿದ್ದು, ಮತ್ತೋರ್ವನ ಸ್ಥಿತಿ ಚಿಂತಾಜನಕವಾಗಿದೆ.

ಕಲಬುರಗಿ ನಗರದ ಹೀರಾಪುರ ರಸ್ತೆಯ ಫ್ಲೈಓವರ್ ಮೇಲೆ ಈ ಅಪಘಾತ ಸಂಭವಿಸಿದೆ.

ಮೃತರನ್ನು ಕೊಟನೂರು ಬಡಾವಣೆಯ ನಿವಾಸಿ ಪ್ರಶಾಂತ್ ಬಿರಾದರ್ (23) ಎಂದು ಗುರುತಿಸಲಾಗಿದೆ. ಕಳೆದ ರಾತ್ರಿ ಪ್ರಶಾಂತ್ ತಮ್ಮ ಸ್ನೇಹಿತರೊಂದಿಗೆ ಗಣೇಶನ ಮೂರ್ತಿ ತರಲು ತೆರಳುತ್ತಿದ್ದರು.

ಈ ವೇಳೆ ಪಕ್ಕದಲ್ಲಿದ್ದ ಮತ್ತೊಂದು ಬೈಕ್‌ಗೆ ಟಚ್ ಆಗಿದ್ದು, ಬೈಕ್‌ಗಳು ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿವೆ. ಅಪಘಾತದಲ್ಲಿ ಇಬ್ಬರು ಸವಾರರ ತಲೆಗೆ ಗಂಭೀರ ಗಾಯಗಳಾಗಿವೆ.

ಗಾಯಗೊಂಡ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಪ್ರಶಾಂತ್ ಬಿರಾದರ್ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮತ್ತೋರ್ವ ಗಾಯಾಳುವಿಗೆ ಚಿಕಿತ್ಸೆ ಮುಂದುವರಿದಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ.

ಘಟನೆ ಸಂಬಂಧ ಕಲಬುರಗಿ ಸಂಚಾರಿ ಪೊಲೀಸ್ ಠಾಣೆ-1ರಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಜ್ವರ ಕಡಿಮೆಯಾದರೂ ಅಪಾಯ ತಪ್ಪಿದ್ದಲ್ಲ; ಡೆಂಗ್ಯೂನಲ್ಲಿ ಈ ಲಕ್ಷಣಗಳಿರಬಹುದು!

0

ಮಳೆಗಾಲದಲ್ಲಿ ಜ್ವರ, ವಾಂತಿ, ವಾಕರಿಕೆ ಹಾಗೂ ಅತಿಸಾರದಂತಹ ಆರೋಗ್ಯ ಸಮಸ್ಯೆಗಳು ಸಾಮಾನ್ಯವಾಗಿ ಕಾಣಿಸಿಕೊಳ್ಳುತ್ತವೆ.

ಇಂತಹ ಸಂದರ್ಭದಲ್ಲಿ ಡೆಂಗ್ಯೂ ಇರಬಹುದೇ ಎಂಬ ಅನುಮಾನ ಮೂಡುವುದು ಸಹಜ. ಸಾಮಾನ್ಯವಾಗಿ ಡೆಂಗ್ಯೂ ಎಂದರೆ ಹೆಚ್ಚಿನ ಜ್ವರ, ತಲೆನೋವು, ಮೈ-ಕೈ ನೋವು ಹಾಗೂ ಸುಸ್ತು ನೆನಪಿಗೆ ಬರುತ್ತದೆ. ಆದರೆ ಸೋಂಕಿಗೆ ಒಳಗಾದ ಪ್ರತಿಯೊಬ್ಬರಲ್ಲೂ ಇದೇ ಲಕ್ಷಣಗಳು ಕಾಣಿಸಿಕೊಳ್ಳಬೇಕೆಂದಿಲ್ಲ.

ಕೆಲವರಲ್ಲಿ ಡೆಂಗ್ಯೂ ಸೋಂಕಿನ ಲಕ್ಷಣಗಳು ಸೌಮ್ಯವಾಗಿರಬಹುದು. ಇನ್ನೂ ಕೆಲವರಲ್ಲಿ ಸಾಮಾನ್ಯವಾಗಿ ಕಂಡುಬರುವ ಲಕ್ಷಣಗಳಿಗಿಂತ ಭಿನ್ನವಾದ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳಬಹುದು. ಕೆಲವೊಮ್ಮೆ ಸ್ಪಷ್ಟವಾದ ಯಾವುದೇ ಲಕ್ಷಣಗಳಿಲ್ಲದೆಯೂ ಸೋಂಕು ಇರಬಹುದು. ಹೀಗಾಗಿ ಜ್ವರ ಇಲ್ಲ ಎಂಬ ಕಾರಣಕ್ಕೆ ಮಾತ್ರ ಡೆಂಗ್ಯೂ ಸಾಧ್ಯತೆಯನ್ನು ಸಂಪೂರ್ಣವಾಗಿ ತಳ್ಳಿಹಾಕಬಾರದು ಎಂದು ವೈದ್ಯರು ಎಚ್ಚರಿಸಿದ್ದಾರೆ.

ಯಥಾರ್ಥ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಆಂತರಿಕ ವೈದ್ಯಕೀಯ ವಿಭಾಗದ ಹಿರಿಯ ಸಲಹೆಗಾರರಾದ ಡಾ. ರೇಷು ಅಗರ್ವಾಲ್ ಅವರ ಪ್ರಕಾರ, ಸುತ್ತಮುತ್ತ ಡೆಂಗ್ಯೂ ಪ್ರಕರಣಗಳು ಹೆಚ್ಚಾಗಿರುವ ಸಂದರ್ಭದಲ್ಲಿ ಹಠಾತ್ ಸುಸ್ತು, ಮೈ ನೋವು ಅಥವಾ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳು ಕಾಣಿಸಿಕೊಂಡರೆ ಜ್ವರವಿಲ್ಲದಿದ್ದರೂ ಡೆಂಗ್ಯೂ ಸಾಧ್ಯತೆಯನ್ನು ಪರಿಗಣಿಸಬೇಕು.

ಯಾವ ಲಕ್ಷಣಗಳ ಬಗ್ಗೆ ಎಚ್ಚರಿಕೆ ವಹಿಸಬೇಕು?

ವಾಂತಿ, ಅತಿಸಾರ, ಹೊಟ್ಟೆ ನೋವು, ಅಜೀರ್ಣದ ಜತೆಗೆ ಸುಸ್ತು, ತಲೆನೋವು, ಕಣ್ಣಿನ ನೋವು, ಸ್ನಾಯು ಮತ್ತು ಕೀಲು ನೋವು, ಹಸಿವಾಗದಿರುವುದು ಹಾಗೂ ಚರ್ಮದ ಮೇಲೆ ಕೆಂಪು ಕಲೆಗಳು ಕಾಣಿಸಿಕೊಳ್ಳಬಹುದು. ಕೆಲವು ಸಂದರ್ಭಗಳಲ್ಲಿ ಡೆಂಗ್ಯೂ ದೇಹದ ಪ್ರಮುಖ ಅಂಗಗಳ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ.

ನಿರಂತರ ಹೊಟ್ಟೆ ನೋವು, ಪದೇಪದೇ ವಾಂತಿ, ಉಸಿರಾಟದ ತೊಂದರೆ, ಮೂಗು ಅಥವಾ ಹಲ್ಲಿನ ಒಸಡುಗಳಿಂದ ರಕ್ತಸ್ರಾವ ಹಾಗೂ ತೀವ್ರ ಚಡಪಡಿಕೆಯಂತಹ ಲಕ್ಷಣಗಳು ಕಂಡುಬಂದರೆ ವಿಶೇಷ ಎಚ್ಚರಿಕೆ ವಹಿಸಬೇಕು. ಇವುಗಳನ್ನು ಕೇವಲ ಸುಸ್ತು ಅಥವಾ ಹವಾಮಾನ ಬದಲಾವಣೆಯಿಂದ ಉಂಟಾದ ಸಮಸ್ಯೆ ಎಂದು ನಿರ್ಲಕ್ಷಿಸಬಾರದು.

ಜ್ವರ ಕಡಿಮೆಯಾದರೆ ಅಪಾಯ ಮುಗಿಯಿತೇ?

ಡೆಂಗ್ಯೂ ಕುರಿತು ಇರುವ ಪ್ರಮುಖ ತಪ್ಪು ಕಲ್ಪನೆಗಳಲ್ಲಿ ಜ್ವರ ಕಡಿಮೆಯಾದ ಬಳಿಕ ಅಪಾಯವೂ ಮುಗಿಯುತ್ತದೆ ಎಂಬುದೂ ಒಂದು. ಆದರೆ ಕೆಲವು ರೋಗಿಗಳಲ್ಲಿ ಜ್ವರ ಕಡಿಮೆಯಾಗುವ ಸಮಯದಲ್ಲೇ ಮತ್ತಷ್ಟು ಆರೋಗ್ಯ ಸಮಸ್ಯೆಗಳು ಆರಂಭವಾಗಬಹುದು.

ಈ ಸಂದರ್ಭದಲ್ಲಿ ದೇಹದಲ್ಲಿ ನೀರಿನ ಕೊರತೆ ಸೇರಿದಂತೆ ಇತರ ತೊಂದರೆಗಳು ಉಂಟಾಗುವ ಸಾಧ್ಯತೆ ಇರುವುದರಿಂದ, ಜ್ವರ ಕಡಿಮೆಯಾದ ಬಳಿಕವೂ ರೋಗಿಯ ಆರೋಗ್ಯದ ಮೇಲೆ ನಿಗಾ ಇರಿಸುವುದು ಮುಖ್ಯ ಎಂದು ವೈದ್ಯರು ಸಲಹೆ ನೀಡಿದ್ದಾರೆ.

ಹೀಗಾಗಿ ಮಳೆಗಾಲದಲ್ಲಿ ಜ್ವರ ಮಾತ್ರವಲ್ಲದೆ ವಾಂತಿ, ಹೊಟ್ಟೆ ನೋವು, ಅತಿಸಾರ, ತೀವ್ರ ಸುಸ್ತು ಅಥವಾ ರಕ್ತಸ್ರಾವದಂತಹ ಲಕ್ಷಣಗಳು ಕಂಡುಬಂದರೆ ವೈದ್ಯರನ್ನು ಸಂಪರ್ಕಿಸಿ ಸೂಕ್ತ ಪರೀಕ್ಷೆ ಮಾಡಿಸಿಕೊಳ್ಳುವುದು ಅಗತ್ಯ.

ಗಣೇಶ ಮೆರವಣಿಗೆ ನೋಡಿ ಮನೆಗೆ ಮರಳುವಾಗ ಭೀಕರ ಅಪಘಾತ; ಮೂವರು ಯುವಕರ ಸಾವು

0

ಬೆಳಗಾವಿ: ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ ಹೊರವಲಯದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬೈಕ್‌ನಲ್ಲಿದ್ದ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಗಣೇಶ ಮೆರವಣಿಗೆ ವೀಕ್ಷಿಸಿ ಬೈಕ್‌ನಲ್ಲಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಸವದತ್ತಿಯಿಂದ ಧಾರವಾಡದತ್ತ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಧಾರವಾಡದಿಂದ ಸವದತ್ತಿ ಕಡೆಗೆ ಬರುತ್ತಿದ್ದ ಬೈಕ್ ನಡುವೆ ಡಿಕ್ಕಿಯಾಗಿದೆ.

ಡಿಕ್ಕಿಯ ರಭಸಕ್ಕೆ ಬೈಕ್‌ನಲ್ಲಿದ್ದ ಮೂವರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಸವದತ್ತಿ ಪಟ್ಟಣದ ನಿವಾಸಿಗಳಾದ ವಿನೋದ್ ಹೊಗೆನ್ನವರ (22), ಆಕಾಶ್ ಜಾಧವ್ (20) ಹಾಗೂ ರವಿ ಕುರುಬರ (22) ಎಂದು ಗುರುತಿಸಲಾಗಿದೆ.

ಘಟನಾ ಸ್ಥಳಕ್ಕೆ ಸವದತ್ತಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.

ಗಣೇಶ ಮೆರವಣಿಗೆ ಸಂಭ್ರಮ ಮುಗಿಸಿ ಮನೆಗೆ ಮರಳುತ್ತಿದ್ದ ಮೂವರು ಯುವಕರಿಗೆ ಅಪಘಾತ ದುರಂತ ಅಂತ್ಯ ಕಂಡಿದೆ.

ಫ್ಲೈಟ್ ಜರ್ನಿ ನಡುವೆ ಆರೋಗ್ಯ ಸಮಸ್ಯೆ; ಬಿಗ್ ಬಾಸ್ ಮನೆಯಿಂದ ಓಂ ಪ್ರಕಾಶ್ ರಾವ್ ಔಟ್

0

ಬೆಂಗಳೂರು: ನಟ ಹಾಗೂ ನಿರ್ದೇಶಕ ಓಂ ಪ್ರಕಾಶ್ ರಾವ್ ಅವರಿಗೆ ಎರಡನೇ ಬಾರಿಗೆ ಬಿಗ್ ಬಾಸ್ ಮನೆಗೆ ಪ್ರವೇಶಿಸುವ ಅವಕಾಶ ಸಿಕ್ಕಿತ್ತು. ಆದರೆ, ಅನಾರೋಗ್ಯದ ಹಿನ್ನೆಲೆಯಲ್ಲಿ ಅವರು ದೊಡ್ಮನೆಯಿಂದ ಹೊರಬಂದಿದ್ದಾರೆ.

ಸೆಪ್ಟೆಂಬರ್ 14ರ ಎಪಿಸೋಡ್‌ನಲ್ಲಿ ಮುಂಜಾನೆ ಕೆಲ ಸಮಯ ಮಾತ್ರ ಅವರು ಕಾಣಿಸಿಕೊಂಡಿದ್ದು, ಬಳಿಕ ಬಿಗ್ ಬಾಸ್ ಮನೆಯಲ್ಲಿ ಕಾಣಿಸಿಕೊಂಡಿಲ್ಲ.

ಓಂ ಪ್ರಕಾಶ್ ರಾವ್ ಅವರಿಗೆ ವಯಸ್ಸಿನ ಕಾರಣದಿಂದ ಹಲವು ಆರೋಗ್ಯ ಸಮಸ್ಯೆಗಳು ಕಾಡುತ್ತಿವೆ ಎನ್ನಲಾಗಿದೆ. ಇದರ ನಡುವೆಯೂ ಕಳೆದ ಒಂದು ವಾರದಿಂದ ಅವರು ಬಿಗ್ ಬಾಸ್ ಮನೆಯಲ್ಲಿ ಉಳಿದುಕೊಂಡಿದ್ದರು. ಆದರೆ, ಈ ಬಾರಿಯ ಬಿಗ್ ಬಾಸ್ ಮನೆಯ ಫ್ಲೈಟ್ ಜರ್ನಿ ಅವರಿಗೆ ಹೆಚ್ಚು ಕಷ್ಟಕರವಾಗಿತ್ತು.

ಬಿಗ್ ಬಾಸ್ ಮನೆಯ ಸ್ಪರ್ಧಿಗಳನ್ನು ಎರಡು ಗುಂಪುಗಳಾಗಿ ವಿಂಗಡಿಸಿ, ಕೆಲವರನ್ನು ಮನೆಯೊಳಗೆ ಹಾಗೂ ಇನ್ನು ಕೆಲವರನ್ನು ಗಾರ್ಡನ್ ಏರಿಯಾದಲ್ಲಿ ನಿರ್ಮಿಸಲಾಗಿದ್ದ ಫ್ಲೈಟ್‌ನಲ್ಲಿ ಇರಿಸಲಾಗಿತ್ತು. ಈ ವೇಳೆ ಸ್ಪರ್ಧಿಗಳಿಗೆ ಒತ್ತಡದ ಪರಿಸ್ಥಿತಿ ಎದುರಾಗಿತ್ತು. ಈ ಪರಿಸ್ಥಿತಿಯನ್ನು ಎದುರಿಸಲು ಓಂ ಪ್ರಕಾಶ್ ರಾವ್ ಅವರಿಗೆ ಸಾಧ್ಯವಾಗದ ಹಿನ್ನೆಲೆಯಲ್ಲಿ ಅವರು ಮನೆಯಿಂದ ಹೊರಬರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎನ್ನಲಾಗಿದೆ.

ಈ ಹಿಂದೆ ಕೂಡ ಅನಾರೋಗ್ಯದ ಕಾರಣ ಕೆಲ ಸ್ಪರ್ಧಿಗಳು ಬಿಗ್ ಬಾಸ್ ಮನೆಯಿಂದ ಹೊರಬಂದು, ಚಿಕಿತ್ಸೆ ಪಡೆದು ಮತ್ತೆ ದೊಡ್ಮನೆಗೆ ಮರಳಿದ ಉದಾಹರಣೆಗಳಿವೆ. ಆದರೆ, ಓಂ ಪ್ರಕಾಶ್ ರಾವ್ ಅವರು ಸದ್ಯ ತಮ್ಮ ಆರೋಗ್ಯದ ದೃಷ್ಟಿಯಿಂದ ಮತ್ತೆ ಬಿಗ್ ಬಾಸ್ ಮನೆಗೆ ಮರಳದಿರಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಈ ಬಾರಿ ದೊಡ್ಮನೆಯಲ್ಲಿ ಓಂ ಪ್ರಕಾಶ್ ರಾವ್ ಹೆಚ್ಚು ಕಾಣಿಸಿಕೊಂಡಿರಲಿಲ್ಲ. ಕಿರಿಯ ಸ್ಪರ್ಧಿಗಳಿಗೆ ಸಲಹೆ ಹಾಗೂ ಮಾರ್ಗದರ್ಶನ ನೀಡುತ್ತಾ ಅವರು ಮನೆಯಲ್ಲಿದ್ದರು. ಇದೀಗ ಅವರು ಬಿಗ್ ಬಾಸ್ ಮನೆಯಿಂದ ಹೊರಬಂದಿರುವುದು ಸಹ ಸ್ಪರ್ಧಿಗಳಿಗೆ ಹಾಗೂ ವೀಕ್ಷಕರಿಗೆ ಬೇಸರ ಮೂಡಿಸಿದೆ.

ಬರ ಪರಿಸ್ಥಿತಿ, ರೈತರ ಸಮಸ್ಯೆ ಚರ್ಚೆಗೆ ವಿಶೇಷ ಅಧಿವೇಶನ; ಸೆ.21ರಿಂದ 3 ದಿನ ಕಲಾಪ!

0

ಬೆಂಗಳೂರು: ರಾಜ್ಯದಲ್ಲಿ ತಲೆದೋರಿರುವ ಬರ ಪರಿಸ್ಥಿತಿ ಹಾಗೂ ಪಶ್ಚಿಮ ಘಟ್ಟಗಳ ಕಸ್ತೂರಿ ರಂಗನ್ ವರದಿ ಕುರಿತು ಚರ್ಚಿಸಲು ರಾಜ್ಯ ಸರ್ಕಾರ ಮೂರು ದಿನಗಳ ಕಾಲ ವಿಧಾನಮಂಡಲದ ವಿಶೇಷ ಅಧಿವೇಶನ ಕರೆಯಲು ತೀರ್ಮಾನಿಸಿದೆ.

ಸೆಪ್ಟೆಂಬರ್ 21, 22 ಮತ್ತು 23ರಂದು ಅಧಿವೇಶನ ನಡೆಯಲಿದ್ದು, ಪ್ರಮುಖ ರೈತ ಸಮಸ್ಯೆಗಳು ಹಾಗೂ ರಾಜ್ಯದ ಜ್ವಲಂತ ವಿಚಾರಗಳ ಕುರಿತು ಚರ್ಚೆ ನಡೆಯಲಿದೆ.

ಮುಂಗಾರು ಅಧಿವೇಶನದಲ್ಲಿ ಪ್ರತಿಪಕ್ಷಗಳ ಪ್ರತಿಭಟನೆ ಮತ್ತು ಗದ್ದಲದಿಂದ ಬರ ಪರಿಸ್ಥಿತಿ ಕುರಿತು ಸಮಗ್ರ ಚರ್ಚೆ ನಡೆದಿರಲಿಲ್ಲ. ಈ ಹಿನ್ನೆಲೆಯಲ್ಲಿ ರೈತರ ಸಮಸ್ಯೆಗಳು, ಕುಡಿಯುವ ನೀರು, ಜಾನುವಾರುಗಳಿಗೆ ಮೇವಿನ ಕೊರತೆ ಹಾಗೂ ಬರಪೀಡಿತ ತಾಲೂಕುಗಳ ಸ್ಥಿತಿಗತಿ ಕುರಿತು ಚರ್ಚಿಸಲು ವಿಶೇಷ ಅಧಿವೇಶನ ನಡೆಸಲಾಗುತ್ತಿದೆ.

101 ತಾಲೂಕುಗಳ ಬರ ಪರಿಸ್ಥಿತಿ ಚರ್ಚೆ;

ಈಗಾಗಲೇ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, ಈ ತಾಲೂಕುಗಳಲ್ಲಿ ಎದುರಾಗಿರುವ ಕುಡಿಯುವ ನೀರು ಮತ್ತು ಮೇವಿನ ಸಮಸ್ಯೆ ಕುರಿತು ಸದನದಲ್ಲಿ ಚರ್ಚೆ ನಡೆಯಲಿದೆ. ಬರ ಪರಿಹಾರಕ್ಕಾಗಿ ಕೇಂದ್ರ ಸರ್ಕಾರದಿಂದ ಬರಬೇಕಿರುವ ಅನುದಾನದ ಬಗ್ಗೆಯೂ ಸರ್ಕಾರ ಹಾಗೂ ಪ್ರತಿಪಕ್ಷಗಳ ನಡುವೆ ಚರ್ಚೆ ನಡೆಯುವ ಸಾಧ್ಯತೆಯಿದೆ.

ಕಸ್ತೂರಿ ರಂಗನ್ ವರದಿಗೆ ವಿರೋಧ:

ಪಶ್ಚಿಮ ಘಟ್ಟ ಪ್ರದೇಶದ ಶೇ.37ರಷ್ಟು ಭಾಗವನ್ನು ಪರಿಸರ ಸೂಕ್ಷ್ಮ ವಲಯವೆಂದು ಘೋಷಿಸುವ ಸಂಬಂಧ ಕೇಂದ್ರ ಸರ್ಕಾರ ಏಳನೇ ಬಾರಿಗೆ ಕರಡು ಅಧಿಸೂಚನೆ ಹೊರಡಿಸಿದೆ. ರಾಜ್ಯ ಸರ್ಕಾರ ಈ ಹಿಂದೆಯೇ ವರದಿಯನ್ನು ವಿರೋಧಿಸಿದ್ದು, ಇದೀಗ ಪಶ್ಚಿಮ ಘಟ್ಟ ವ್ಯಾಪ್ತಿಯ ಜನಪ್ರತಿನಿಧಿಗಳನ್ನು ವಿಶ್ವಾಸಕ್ಕೆ ಪಡೆದು ಕೇಂದ್ರಕ್ಕೆ ಒಮ್ಮತದ ವಿರೋಧ ನಿರ್ಣಯ ಕಳುಹಿಸಲು ಮುಂದಾಗಿದೆ.

ಕೃಷಿ, ಜನಜೀವನ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಧಕ್ಕೆಯಾಗದ ರೀತಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂಬ ನಿಲುವನ್ನು ರಾಜ್ಯ ಸರ್ಕಾರ ಹೊಂದಿದೆ.

ಇನ್ನೂ ಹಲವು ವಿಚಾರಗಳು ಚರ್ಚೆಗೆ:

ವಿಶೇಷ ಅಧಿವೇಶನದಲ್ಲಿ ತೋಟಗಾರಿಕೆ ಫಾರ್ಮ್‌ಗಳ ಜಮೀನು ಪರಭಾರೆ ತಿದ್ದುಪಡಿ ವಿಧೇಯಕ, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಮರುಪರಿಶೀಲನೆ ಸೇರಿದಂತೆ ಹಲವು ಪ್ರಮುಖ ವಿಚಾರಗಳು ಚರ್ಚೆಗೆ ಬರಲಿವೆ.

ಇದೇ ವೇಳೆ ರಾಜ್ಯದಲ್ಲಿನ ವಿದ್ಯುತ್ ಅಭಾವ, ಮೋಡ ಬಿತ್ತನೆ ಯೋಜನೆಯ ವೈಫಲ್ಯ, ಬಿಡದಿ ಟೌನ್‌ಶಿಪ್ ಹಾಗೂ ನೈಸ್ ಟೋಲ್ ವಿಚಾರಗಳನ್ನು ಪ್ರಸ್ತಾಪಿಸಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಬಿಜೆಪಿ ಮತ್ತು ಜೆಡಿಎಸ್ ನಾಯಕರು ಸಿದ್ಧತೆ ನಡೆಸಿದ್ದಾರೆ.

ರೈತರ ಸಮಸ್ಯೆಗಳಿಗೆ ಪರಿಹಾರ ಸಿಗುತ್ತಾ?

ವಿಶೇಷ ಅಧಿವೇಶನದ ಕುರಿತು ಮಾತನಾಡಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮುಂಗಾರು ಅಧಿವೇಶನದಲ್ಲಿ ಪ್ರತಿಪಕ್ಷಗಳ ಗದ್ದಲದಿಂದ ಬರದ ಕುರಿತು ಚರ್ಚೆ ಸಾಧ್ಯವಾಗದ ಹಿನ್ನೆಲೆಯಲ್ಲಿ ವಿಶೇಷ ಅಧಿವೇಶನ ಕರೆಯಲಾಗಿದೆ ಎಂದು ಹೇಳಿದ್ದಾರೆ. ರೈತರ ಸದ್ಯದ ಸಮಸ್ಯೆಗಳ ಕುರಿತು ಚರ್ಚಿಸಲು ಅಧಿವೇಶನ ಮೀಸಲಾಗಿದೆ ಎಂದು ಸರ್ಕಾರ ತಿಳಿಸಿದೆ.

ಹೀಗಾಗಿ ಮೂರು ದಿನಗಳ ವಿಶೇಷ ಅಧಿವೇಶನದಲ್ಲಿ ಬರ ಪರಿಸ್ಥಿತಿ, ರೈತರ ಸಮಸ್ಯೆಗಳು ಹಾಗೂ ಕಸ್ತೂರಿ ರಂಗನ್ ವರದಿ ಸೇರಿದಂತೆ ಪ್ರಮುಖ ವಿಚಾರಗಳ ಕುರಿತು ಯಾವ ರೀತಿಯ ಚರ್ಚೆ ನಡೆಯಲಿದೆ ಮತ್ತು ಸರ್ಕಾರ ಯಾವ ಕ್ರಮಗಳನ್ನು ಘೋಷಿಸಲಿದೆ ಎಂಬುದು ಇದೀಗ ಕುತೂಹಲ ಮೂಡಿಸಿದೆ.