ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಹಾಯಕರಂತೆ ವರ್ತಿಸುತ್ತಿದ್ದಾರೆ. ಅವರು ಗಟ್ಟಿಯಾಗಿ ನಿಲ್ಲಬೇಕಾದ ಸಂದರ್ಭದಲ್ಲಿ ನಿಲ್ತಿಲ್ಲ ಎಂದು ಮಾಜಿ ಸಚಿವ ಕೆ.ಎನ್. ರಾಜಣ್ಣ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಸಿಎಂರಿಂದ ಇಂತಹ ಅಸಹಾಯಕತೆ ನಿರೀಕ್ಷಿಸಿರಲಿಲ್ಲ. ಅವರಿಗೆ ಯಾವ ಅಡೆತಡೆ ಇದೆ ಎಂಬುದು ತಿಳಿಯುತ್ತಿಲ್ಲ. ಏಕೆ ತಟಸ್ಥ ಧೋರಣೆ ತಾಳುತ್ತಿದ್ದಾರೆ ಎಂಬುದೂ ಗೊತ್ತಿಲ್ಲ. ಈ ಬಗ್ಗೆ ಅವರು ನಮಗೆ ಯಾವುದೇ ಮಾಹಿತಿ ನೀಡುತ್ತಿಲ್ಲ ಎಂದು ಹೇಳಿದರು.
ಸಿಎಂ ಪರ ಇರುವವರನ್ನೇ ಗುರಿಯಾಗಿಸಲಾಗುತ್ತಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಪಕ್ಷಕ್ಕೆ ನಿಷ್ಠೆಯಿಂದ ಕೆಲಸ ಮಾಡುವವರ ವಿರುದ್ಧ ಪಟ್ಟಭದ್ರ ಹಿತಾಸಕ್ತಿಗಳು ಹುನ್ನಾರ ಮಾಡುತ್ತಿರುವುದರಿಂದ ಇಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅಭಿಪ್ರಾಯಪಟ್ಟರು.
ಇಂತಹ ಸಂದರ್ಭಗಳಲ್ಲಿ ಮುಖ್ಯಮಂತ್ರಿ ಗಟ್ಟಿಯಾಗಿ ನಿಲ್ಲಬೇಕಿತ್ತು ಎಂದು ಅವರು ಒತ್ತಿಹೇಳಿದರು. ಇದೇ ವೇಳೆ, ಕೆಲವರು ಪಕ್ಷದ ವಿರುದ್ಧ ಮಾತನಾಡಿದ್ದರೂ ಅಥವಾ ನಡೆದುಕೊಂಡಿದ್ದರೂ ಅವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ. ಆದರೆ ಕೆಲವರ ವಿರುದ್ಧ ಮಾತ್ರ ಕ್ರಮ ಕೈಗೊಳ್ಳುವುದು ಸರಿಯೇ ಎಂದು ಪ್ರಶ್ನಿಸಿದರು.
ಪಕ್ಷವಿರೋಧಿ ಹೇಳಿಕೆ ನೀಡಿದವರ ವಿರುದ್ಧ ಕ್ರಮ ಯಾಕೆ ಇಲ್ಲ ಎಂಬುದರ ಬಗ್ಗೆ ಸ್ಪಷ್ಟನೆ ನೀಡಬೇಕು ಎಂದು ರಾಜಣ್ಣ ಆಗ್ರಹಿಸಿದರು.






