Home Blog

ರಾಜ್ಯದಲ್ಲಿ ಕಲಬುರಗಿಯಲ್ಲಿ ಗರಿಷ್ಠ ತಾಪಮಾನ ದಾಖಲು: ಆರೆಂಜ್ ಅಲರ್ಟ್ ಘೋಷಣೆ!

ಕಲಬುರಗಿ: ರಾಜ್ಯದಲ್ಲಿ ಉಷ್ಣಾಂಶ ತೀವ್ರ ಏರಿಕೆಯಾಗಿದ್ದು, ಕಲಬುರಗಿ ಜಿಲ್ಲೆಯಲ್ಲಿ ಬುಧವಾರ ಅತೀ ಹೆಚ್ಚು ತಾಪಮಾನ ದಾಖಲಾಗಿದೆ. ಬಿಸಿಲಿನ ತೀವ್ರತೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ.

ಜಿಲ್ಲೆಯ ನಾಲ್ಕು ತಾಲೂಕುಗಳಲ್ಲಿ ಉಷ್ಣಾಂಶ ಗರಿಷ್ಠ ಮಟ್ಟ ತಲುಪಿದೆ. ಔರಾದ್ ಪ್ರದೇಶದಲ್ಲಿ 45 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದ್ದು, ಚಿಂಚೋಳಿ ಹಾಗೂ ಅಫಜಲಪುರ ತಾಲೂಕುಗಳಲ್ಲಿ ತಲಾ 44.03 ಡಿಗ್ರಿ, ಆಳಂದ ತಾಲೂಕಿನಲ್ಲಿ 44.01 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ವಿಶೇಷವಾಗಿ ಔರಾದ್ ಪ್ರದೇಶದಲ್ಲಿನ ಉಷ್ಣಾಂಶ ಏರಿಕೆ ಆತಂಕಕ್ಕೆ ಕಾರಣವಾಗಿದೆ.

ತಾಪಮಾನದಲ್ಲಿ ನಿರಂತರ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಮಧ್ಯಾಹ್ನ 12 ಗಂಟೆಯಿಂದ ಸಂಜೆವರೆಗೆ ಅನಾವಶ್ಯಕವಾಗಿ ಹೊರಗೆ ಸಂಚರಿಸಬಾರದು ಎಂದು ಜಿಲ್ಲಾಡಳಿತ ಸಾರ್ವಜನಿಕರಿಗೆ ಸೂಚನೆ ನೀಡಿದೆ.

ಬಿಸಿಲಿನ ಪರಿಣಾಮ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ, ಹೆಚ್ಚಿನ ಪ್ರಮಾಣದಲ್ಲಿ ನೀರು ಕುಡಿಯುವುದು, ನೆರಳಿನಲ್ಲಿ ಇರುವಿಕೆ ಹಾಗೂ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

ರಸ್ತೆ ಅಪಘಾತದಲ್ಲಿ ಮೃತಪಟ್ಟ ಕ್ಷೌರಿಕನ ಕುಟುಂಬಕ್ಕೆ ₹44.47 ಲಕ್ಷ ಪರಿಹಾರ ನೀಡಲು ಹೈಕೋರ್ಟ್ ಆದೇಶ!

ಬೆಂಗಳೂರು: ರಸ್ತೆ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಪರಿಹಾರ ನೀಡುವುದು ಮೋಟಾರು ವಾಹನ ಕಾಯ್ದೆಯ ಪ್ರಮುಖ ಉದ್ದೇಶ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಈ ಹಿನ್ನೆಲೆ, ಅಪಘಾತದಲ್ಲಿ ಮೃತಪಟ್ಟ ಕ್ಷೌರಿಕನ ಕುಟುಂಬಕ್ಕೆ ₹44.47 ಲಕ್ಷ ಪರಿಹಾರವನ್ನು ನೀಡಲು ವಿಮಾ ಕಂಪನಿಗೆ ಆದೇಶಿಸಿದೆ.

ನ್ಯಾಯಮೂರ್ತಿಗಳಾದ ಡಿ.ಕೆ. ಸಿಂಗ್ ಮತ್ತು ಎಸ್. ರಾಚಯ್ಯ ಅವರಿದ್ದ ಪೀಠವು, ಮೃತರ ಕುಟುಂಬ ಹಾಗೂ ವಿಮಾ ಕಂಪನಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿ ಈ ತೀರ್ಪು ನೀಡಿದೆ.

ದಾಖಲೆಗಳ ಪರಿಶೀಲನೆಯ ಬಳಿಕ, ಮೃತ ವ್ಯಕ್ತಿ ಕ್ಷೌರಿಕ ವೃತ್ತಿಯಲ್ಲಿ ತೊಡಗಿದ್ದು ತಿಂಗಳಿಗೆ ₹14,000 ಆದಾಯ ಹೊಂದಿದ್ದನೆಂದು ಪರಿಗಣಿಸಿ, ನ್ಯಾಯಮಂಡಳಿ ನೀಡಿದ್ದ ₹32.56 ಲಕ್ಷ ಪರಿಹಾರವನ್ನು ₹44.47 ಲಕ್ಷಕ್ಕೆ ಹೆಚ್ಚಿಸಲಾಗಿದೆ. ಹೆಚ್ಚುವರಿ ₹11.91 ಲಕ್ಷಕ್ಕೆ ಶೇ.6 ಬಡ್ಡಿಯೊಂದಿಗೆ ಆರು ವಾರಗಳಲ್ಲಿ ಪಾವತಿಸುವಂತೆ ಸೂಚಿಸಲಾಗಿದೆ.

ಇದಲ್ಲದೆ, ಅಪಘಾತದ ವೇಳೆ ಮೃತರೇ ವಾಹನ ಚಾಲನೆ ಮಾಡುತ್ತಿದ್ದರು ಎಂಬ ವಿಮಾ ಕಂಪನಿಯ ವಾದವನ್ನು ನ್ಯಾಯಾಲಯ ತಿರಸ್ಕರಿಸಿದೆ. ವಾಹನವನ್ನು ಚಲಾಯಿಸುತ್ತಿದ್ದವರು ಬೇರೆ ವ್ಯಕ್ತಿಯಾಗಿದ್ದು, ಮೃತರು ಹಿಂಬದಿ ಸವಾರರಾಗಿದ್ದರು ಎಂದು ಸ್ಪಷ್ಟಪಡಿಸಿದೆ. ಹೀಗಾಗಿ ಪರಿಹಾರ ಪಾವತಿಸುವ ಹೊಣೆಗಾರಿಕೆ ವಿಮಾ ಕಂಪನಿಯ ಮೇಲೇ ಇದೆ ಎಂದು ತಿಳಿಸಿ, ಕಂಪನಿಯ ಅರ್ಜಿಯನ್ನು ವಜಾಗೊಳಿಸಿದೆ.

ಘಟನೆಯ ಹಿನ್ನಲೆ:
2018ರ ಸೆಪ್ಟೆಂಬರ್ 4ರಂದು ಮಂಜುನಾಥ್ ಅವರು ಹಿಂಬದಿ ಸವಾರನಾಗಿ ಪ್ರಯಾಣಿಸುತ್ತಿದ್ದ ವೇಳೆ ನೆಲಮಂಗಲ ಸಮೀಪ ವಾಹನ ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದ್ದರು. ತಲೆಗೆ ಗಂಭೀರ ಗಾಯಗೊಂಡ ಅವರು 2019ರ ಫೆಬ್ರವರಿ 23ರಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು. ಬಳಿಕ ಕುಟುಂಬಸ್ಥರು ಪರಿಹಾರಕ್ಕಾಗಿ ನ್ಯಾಯಾಲಯದ ಮೆಟ್ಟಿಲೇರಿದ್ದರು.

ಬಿಹಾರದಲ್ಲಿ ಬಿಜೆಪಿ ಮೊದಲ ಮುಖ್ಯಮಂತ್ರಿ: ಸಾಮ್ರಾಟ್ ಚೌಧರಿ ಅಧಿಕಾರ ಸ್ವೀಕಾರ

0

ಪಾಟ್ನಾ: ಬಿಹಾರ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಮೂಲಕ ಅವರು ಬಿಹಾರದಲ್ಲಿ ಬಿಜೆಪಿಯಿಂದ ಆಯ್ಕೆಯಾದ ಮೊದಲ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಪಾಟ್ನಾದ ಲೋಕ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಸೈಯದ್ ಅತಾ ಹಸ್ನೈನ್ ಅವರು ಸಾಮ್ರಾಟ್ ಚೌಧರಿಗೆ ಪದವಿ ಪ್ರಮಾಣವಚನ ಬೋಧಿಸಿದರು. ಇದೇ ವೇಳೆ, ಉಪಮುಖ್ಯಮಂತ್ರಿಗಳಾಗಿ ಜೆಡಿಯು ನಾಯಕರುಗಳಾದ ವಿಜಯ್ ಚೌಧರಿ ಮತ್ತು ಬಿಜೇಂದ್ರ ಯಾದವ್ ಪ್ರಮಾಣವಚನ ಸ್ವೀಕರಿಸಿದರು.

ಪ್ರಮಾಣವಚನದ ನಂತರ ಮಾತನಾಡಿದ ಉಪಮುಖ್ಯಮಂತ್ರಿ ವಿಜಯ್ ಚೌಧರಿ, ಮಾಜಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರೊಂದಿಗೆ ಕೆಲಸ ಮಾಡಿದ ಅನುಭವದಿಂದ ಸಾಕಷ್ಟು ಕಲಿತಿದ್ದೇವೆ ಎಂದು ಹೇಳಿದರು. ಅವರ ಆಡಳಿತ ಶೈಲಿಯನ್ನು ಮುಂದುವರಿಸುವುದಾಗಿ ತಿಳಿಸಿದರು.

ಇನ್ನೋರ್ವ ಉಪಮುಖ್ಯಮಂತ್ರಿ ಬಿಜೇಂದ್ರ ಯಾದವ್ ಕೂಡ ಇದೇ ಅಭಿಪ್ರಾಯ ವ್ಯಕ್ತಪಡಿಸಿ, ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ನಿತೀಶ್ ಕುಮಾರ್ ಅವರ ಆಡಳಿತ ಪರಂಪರೆಯನ್ನು ಮುಂದುವರಿಸಲಿದ್ದಾರೆ ಎಂದರು. ಸರ್ಕಾರದಲ್ಲಿ ಯಾವುದೇ ಗೊಂದಲವಿಲ್ಲದೆ ಸುಧಾರಣೆಗಾಗಿ ಒಟ್ಟಾಗಿ ಕೆಲಸ ಮಾಡುವುದಾಗಿ ಹೇಳಿದರು.

ರಾಜ್ಯಸಭೆಗೆ ಆಯ್ಕೆಯಾದ ಹಿನ್ನೆಲೆಯಲ್ಲಿ ನಿತೀಶ್ ಕುಮಾರ್ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಆದಿಚುಂಚನಗಿರಿ ಮಠವು ಆಧ್ಯಾತ್ಮಿಕ ಪರಂಪರೆ ಮತ್ತು ನೈತಿಕ ಮೌಲ್ಯಗಳ ದಾರಿದೀಪ: ಪ್ರಧಾನಿ ಮೋದಿ

ಮಂಡ್ಯ: ಆದಿಚುಂಚನಗಿರಿ ಮಠವು ಆಧ್ಯಾತ್ಮಿಕ ಪರಂಪರೆ ಮತ್ತು ನೈತಿಕ ಮೌಲ್ಯಗಳ ದಾರಿದೀಪವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಶ್ರೀಗುರು ಭೈರವೈಕ್ಯ ಮಂದಿರ ಉದ್ಘಾಟನೆ ಬಳಿಕ ಮಾತನಾಡಿದ ಅವರು, ಕನ್ನಡದಲ್ಲೇ ಭಾಷಣ ಆರಂಭಿಸಿ ಕರ್ನಾಟಕದ ಎಲ್ಲಾ ಸಹೋದರರು ಹಾಗೂ ಸಹೋದರಿಯರಿಗೆ ನನ್ನ ನಮಸ್ಕಾರಗಳು ಎಂದು ಹೇಳಿದರು.

ಕಾಲಭೈರವೇಶ್ವರನ ದರ್ಶನ ಪಡೆದು, ಭೈರವೈಕ್ಯ ಮಂದಿರವನ್ನು ಉದ್ಘಾಟಿಸಿರುವುದು ನನಗೆ ಅಪಾರ ಸಂತೋಷ ತಂದಿದೆ. ಈ ಅನುಭವವನ್ನು ಪದಗಳಲ್ಲಿ ಹೇಳಲು ಸಾಧ್ಯವಿಲ್ಲ. ಪ್ರತೀ ಬಾರಿ ಕರ್ನಾಟಕಕ್ಕೆ ಬಂದಾಗ ಹೊಸ ಪ್ರೇರಣೆ ದೊರೆಯುತ್ತದೆ ಎಂದು ಅವರು ಹೇಳಿದರು.

ಆದಿಚುಂಚನಗಿರಿ ಮಠದಂತಹ ಆಧ್ಯಾತ್ಮಿಕ ಕೇಂದ್ರಗಳು ಸಮಾಜಕ್ಕೆ ದಾರಿದೀಪವಾಗಿವೆ. “ಜಗತ್ತಿನಲ್ಲಿ ಇಂತಹ ಶ್ರೀಮಂತ ಪರಂಪರೆ ಎಲ್ಲೂ ಇಲ್ಲ. ಇಲ್ಲಿ ಪರಂಪರೆ ನಿರಂತರವಾಗಿ ಮುಂದುವರಿದಿದೆ. ಬಾಲಗಂಗಾಧರನಾಥ ಸ್ವಾಮೀಜಿಯವರಂತಹ ಮಹಾತ್ಮರು ಈ ಮಣ್ಣಿನಲ್ಲಿ ಹುಟ್ಟಿದ್ದಾರೆ. ನಿರ್ಮಲಾನಂದನಾಥ ಸ್ವಾಮೀಜಿ ಆ ಪರಂಪರೆಯನ್ನು ಯಶಸ್ವಿಯಾಗಿ ಮುಂದುವರೆಸುತ್ತಿದ್ದಾರೆ ಎಂದು ಮೋದಿ ಪ್ರಶಂಸಿಸಿದರು.

ಸ್ವಾಮೀಜಿಗಳು ದೇಹತಃ ನಮ್ಮೊಂದಿಗೆ ಇರದಿದ್ದರೂ ಅವರ ಆಶೀರ್ವಾದ ಸದಾ ನಮ್ಮೊಂದಿಗಿದೆ. ಅವರು ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಲ್ಲಿ ಮಹತ್ವದ ಸೇವೆ ಸಲ್ಲಿಸಿದ್ದಾರೆ. ನಮ್ಮ ಸರ್ಕಾರವೂ ಇದೇ ದೃಷ್ಟಿಯಿಂದ ಕೆಲಸ ಮಾಡುತ್ತಿದೆ ಎಂದು ಹೇಳಿದರು.

ಮಠದ ಕಾರ್ಯಗಳ ಬಗ್ಗೆ ಮಾತನಾಡಿದ ಅವರು, “ಇದು ಕೇವಲ ಮಾನವರ ಅಭಿವೃದ್ಧಿಗೆ ಮಾತ್ರವಲ್ಲ, ಜೀವ ಸಂಕುಲದ ರಕ್ಷಣೆಯಲ್ಲಿಯೂ ತೊಡಗಿದೆ. ನವಿಲಿನ ಸಂರಕ್ಷಣೆ ಸೇರಿದಂತೆ ಅನೇಕ ಕಾರ್ಯಗಳನ್ನು ಮಾಡುತ್ತಿದೆ,” ಎಂದು ಹೇಳಿದರು.

ಭೈರವೈಕ್ಯ ಮಂದಿರವು ಕೇವಲ ಕಟ್ಟಡವಲ್ಲ, ಭಾವನೆಗಳ ಸಾಕಾರ. ಇದು ಸೇವೆ, ಸಾಧನೆ ಮತ್ತು ಪ್ರೇರಣೆಯ ಕೇಂದ್ರವಾಗಿದೆ. ಇಲ್ಲಿ ಅನ್ನ, ಅಕ್ಷರ, ಆರೋಗ್ಯ, ಅರಣ್ಯ, ಆಕಳು, ಅನುಗ್ರಹ ಮತ್ತು ಅನುಕಂಪ ಎಂಬ ಮೌಲ್ಯಗಳ ಆಧಾರದ ಮೇಲೆ ಕಾರ್ಯ ನಡೆಯುತ್ತಿದೆ. ಇವುಗಳನ್ನು ಮುಂದುವರಿಸಲು ನಾವು ಎಲ್ಲರೂ ಸಾಮೂಹಿಕ ಸಂಕಲ್ಪ ಮಾಡಬೇಕು,” ಎಂದು ಕರೆ ನೀಡಿದರು.

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ: ಕಾಂಗ್ರೆಸ್‌ MLC ಅಬ್ದುಲ್ ಜಬ್ಬಾರ್ ಅಮಾನತು

ಬೆಂಗಳೂರು: ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರನ್ನು ಕಾಂಗ್ರೆಸ್ ಪಕ್ಷದಿಂದ ಅಮಾನತುಗೊಳಿಸಲಾಗಿದೆ.

ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಅಬ್ದುಲ್ ಜಬ್ಬಾರ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿಸಿ ಆದೇಶ ಹೊರಡಿಸಿದ್ದಾರೆ.

ಇತ್ತೀಚೆಗೆ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಅದನ್ನು ಡಿ.ಕೆ. ಶಿವಕುಮಾರ್ ಅಂಗೀಕರಿಸಿದ್ದರು.

ಇದಕ್ಕೂ ಮೊದಲು, ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಸಚಿವ ಜಮೀರ್ ಅಹಮದ್, ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಹಾಗೂ ನಸೀರ್ ಅಹಮದ್ ವಿರುದ್ಧ ಎರಡು ಪುಟಗಳ ವರದಿಯನ್ನು ಹೈಕಮಾಂಡ್‌ಗೆ ಸಲ್ಲಿಸಿ, ಕ್ರಮ ಕೈಗೊಳ್ಳುವಂತೆ ಶಿಫಾರಸು ಮಾಡಿದ್ದರು.

ಯೋಗೇಶ್‌ ಗೌಡ ಹತ್ಯೆ ಕೇಸ್‌: ಇಂದು ಮಧ್ಯಾಹ್ನ 3 ಗಂಟೆಗೆ ತೀರ್ಪು ಪ್ರಕಟ – ಆರೋಪಿಗಳಲ್ಲಿ ಆತಂಕ!

ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದ ತೀರ್ಪನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಮಧ್ಯಾಹ್ನ 3 ಗಂಟೆಗೆ ಮುಂದೂಡಿದೆ.

ಪ್ರಕರಣದ ಎಲ್ಲಾ ಆರೋಪಿಗಳು ನ್ಯಾಯಾಲಯದಲ್ಲಿ ಹಾಜರಾಗಿದ್ದು, ನ್ಯಾಯಾಧೀಶರು ಅವರ ಹಾಜರಿಯನ್ನು ದಾಖಲಿಸಿ ತೀರ್ಪನ್ನು ಮುಂದೂಡಿದರು. ಮಧ್ಯಾಹ್ನ ಬಳಿಕ, ವಿಶೇಷವಾಗಿ 3 ಗಂಟೆ ಸುಮಾರಿಗೆ ತೀರ್ಪು ಪ್ರಕಟವಾಗುವ ಸಾಧ್ಯತೆ ಇದೆ ಎಂಬ ಸುಳಿವು ನೀಡಲಾಗಿದೆ.

ಸುಮಾರು 10 ವರ್ಷಗಳ ವಿಚಾರಣೆ ಬಳಿಕ ಈ ಕೊಲೆ ಪ್ರಕರಣದ ತೀರ್ಪು ಇಂದು ಹೊರಬೀಳಲಿದ್ದು, ಶಾಸಕ ವಿನಯ್ ಕುಲಕರ್ಣಿಗೆ ಶಿಕ್ಷೆಯೋ ಅಥವಾ ಖುಲಾಸೆಯೋ ಎಂಬ ಕುತೂಹಲ ಹಾಗೂ ಆತಂಕ ಹೆಚ್ಚಾಗಿದೆ.

2016ರ ಜೂನ್‌ನಲ್ಲಿ ಧಾರವಾಡದಲ್ಲಿ ಯೋಗೇಶ್ ಗೌಡ ಹತ್ಯೆ ನಡೆದಿತ್ತು. ಈ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ವಿರುದ್ಧ ಕೊಲೆ ಸಂಚು ಆರೋಪ ಕೇಳಿಬಂದಿತ್ತು. ತನಿಖೆ ವೇಳೆ ಆರು ಮಂದಿ ಆರೋಪಿಗಳು ಪೊಲೀಸರ ಮುಂದೆ ಶರಣಾಗಿದ್ದರು.

ಯೋಗೇಶ್ ಗೌಡ ಕುಟುಂಬದ ಮನವಿಯ ಮೇರೆಗೆ 2019ರಲ್ಲಿ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಲಾಗಿತ್ತು. ಬಳಿಕ ಸಿಬಿಐ ಅಧಿಕಾರಿಗಳು ತನಿಖೆ ನಡೆಸಿ ವಿನಯ್ ಕುಲಕರ್ಣಿಯನ್ನು ಬಂಧಿಸಿದ್ದರು.

ಪ್ರಸ್ತುತ ಈ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಸೇರಿದಂತೆ ಇಬ್ಬರು ಪೊಲೀಸರು ಸೇರಿ ಒಟ್ಟು 21 ಮಂದಿ ಆರೋಪಿಗಳಿದ್ದಾರೆ. ಆರೋಪಿಗಳ ಹಾಗೂ ಸರ್ಕಾರಿ ವಕೀಲರು ಸಲ್ಲಿಸಿದ ದಾಖಲೆಗಳ ಪರಿಶೀಲನೆ ಹಿನ್ನೆಲೆಯಲ್ಲಿ, ನ್ಯಾಯಾಲಯ ಏಪ್ರಿಲ್ 9ರಂದು ತೀರ್ಪನ್ನು ಇಂದು (ಏಪ್ರಿಲ್ 15)ಕ್ಕೆ ಮುಂದೂಡಿತ್ತು.

ಡಿಎಂಕೆ ಹಾಗೂ ಮಿತ್ರಪಕ್ಷಗಳಿಗೆ ಮೂರನೇ ಎರಡರಷ್ಟು ಸ್ಥಾನಗಳ ಸುಲಭ ಬಹುಮತ: ಡಿ.ಕೆ. ಶಿವಕುಮಾರ್

0

ಕೊಯಮತ್ತೂರು: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಡಿಎಂಕೆ ಹಾಗೂ ಮಿತ್ರಪಕ್ಷಗಳು ಸುಲಭವಾಗಿ ಮೂರನೇ ಎರಡರಷ್ಟು ಸ್ಥಾನಗಳ ಬಹುಮತ ಗಳಿಸಲಿವೆ. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಹಾಗೂ ಡಿಎಂಕೆ ಮೈತ್ರಿಗೆ ದೊಡ್ಡ ಇತಿಹಾಸವೇ ಇದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಡಿಎಂಕೆ ಮೈತ್ರಿಕೂಟದ ಅಭ್ಯರ್ಥಿಗಳ ಪರ ಪ್ರಚಾರ ಸಭೆಯಲ್ಲಿ ಭಾಗವಹಿಸಲು ಕೊಯಮತ್ತೂರಿಗೆ ತೆರಳಿರುವ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು.

ತಮಿಳುನಾಡು ಚುನಾವಣೆ ಬಗ್ಗೆ ಕೇಳಿದಾಗ, “ಡಿಎಂಕೆ ಸರ್ಕಾರ ಸಮಾಜದ ಪ್ರತಿಯೊಂದು ವರ್ಗ, ಸಮುದಾಯವನ್ನು ಜೊತೆಗೆ ತೆಗೆದುಕೊಂಡು ಹೋಗುತ್ತಿದೆ. ಕಳೆದ ಐದು ವರ್ಷಗಳಲ್ಲಿ ಸರ್ಕಾರ ಅತ್ಯುತ್ತಮವಾಗಿ ಕೆಲಸ ಮಾಡಿದೆ. ಜನರ ಕಲ್ಯಾಣಕ್ಕಾಗಿ ಗ್ಯಾರಂಟಿ ಯೋಜನೆಗಳ ಜೊತೆಗೆ ಅನೇಕ ಯೋಜನೆಗಳನ್ನು ನೀಡಲಾಗಿದೆ. ಕೇಂದ್ರ ಸರ್ಕಾರದ ಬೆಲೆಏರಿಕೆ ನೀತಿಯಿಂದ ತತ್ತರಿಸಿದ್ದ ಜನ ಇದರಿಂದ ಉಪಯೋಗ ಪಡೆದಿದ್ದಾರೆ” ಎಂದರು.

ಮಹಿಳಾ ಮೀಸಲಾತಿ ಜೊತೆಗೆ ಲೋಕಸಭಾ ಸ್ಥಾನಗಳ ಹೆಚ್ಚಳ ಕುರಿತಾದ ಬಿಲ್ ಅನ್ನು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಮಂಡಿಸುವ ಬಗ್ಗೆ ಕೇಳಿದಾಗ, “ಇದು ಸೂಕ್ತ ಸಮಯವಲ್ಲ. ರಾಜಕೀಯ ಲಾಭಕ್ಕಾಗಿ ಈಗ ಮಾಡುತ್ತಿದ್ದಾರೆ. ಇದರ ಬಗ್ಗೆ ವಿಧಾನಸಭಾ ಚುನಾವಣೆಗಳು ಮುಗಿದ ಬಳಿಕ ಚರ್ಚೆ ಮಾಡಬಹುದಲ್ಲವೇ? ಇದು ದೇಶಕ್ಕೆ ಒಳಿತನ್ನು ಮಾಡುವ ಬಿಲ್. ಮಹಿಳೆಯರ ಸಬಲೀಕರಣಕ್ಕೆ ಒತ್ತು ನೀಡುವ ಬಿಲ್ ಆಗಿದ್ದು,

ಒಂದು ರಾಜಕೀಯ ಪಕ್ಷಕ್ಕಾಗಿ ಮಾಡುತ್ತಿರುವ ಬಿಲ್ ಅಲ್ಲ. ಈ ವಿಚಾರದ ಬಗ್ಗೆ ಯುಪಿಎ ಸರ್ಕಾರ ಅಧಿಕಾರದಲ್ಲಿದ್ದಾಗ ಮೊದಲಿಗೆ ಪ್ರಸ್ತಾಪಿಸಲಾಯಿತು. ಕೇಂದ್ರ ಸರ್ಕಾರ ಪ್ರತಿಯೊಂದು ಪಕ್ಷವನ್ನು ವಿಶ್ವಾಸಕ್ಕೆ ತೆಗೆದುಕೊಂಡು ಇದರ ಬಗ್ಗೆ ಆಲೋಚಿಸಬೇಕು. ಮಹಿಳಾ ಮೀಸಲಾತಿ ಮಾಸೂದೆಯನ್ನು ಸೋನಿಯಾಗಾಂಧಿ ಅವರು ಲೋಕಸಭೆಯಲ್ಲಿ ಪಾಸ್ ಆಗುವಂತೆ ನೋಡಿಕೊಂಡಿದ್ದರು” ಎಂದರು.

ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರ ಉದ್ಘಾಟಿಸಿದ ಪ್ರಧಾನಿ ಮೋದಿ

ಮಂಡ್ಯ: ಆದಿಚುಂಚನಗಿರಿ ಮಠದಲ್ಲಿ ದ್ರಾವಿಡ–ಹೊಯ್ಸಳ ಶೈಲಿಯ ಶಿಲ್ಪಕಲೆಯಿಂದ ನಿರ್ಮಿತವಾದ ಶ್ರೀಗುರು ಭೈರವೈಕ್ಯ ಮಂದಿರವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು.

ಇಂದು ಮಂಡ್ಯಕ್ಕೆ ಆಗಮಿಸಿದ ಪ್ರಧಾನಿ ಮೋದಿ, ಮಠದಲ್ಲಿ ಭೈರವೈಕ್ಯ ಮಂದಿರವನ್ನು ಲೋಕಾರ್ಪಣೆ ಮಾಡಿ, ಬಳಿಕ ಕಾಲಭೈರವೇಶ್ವರನಿಗೆ ಆರತಿ ಬೆಳಗಿ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಆದಿಚುಂಚನಗಿರಿ ಮಠದ ಶ್ರೀಗಳು ಅವರಿಗೆ ತಿಲಕವಿಟ್ಟು ಆಶೀರ್ವದಿಸಿದರು.

ಉದ್ಘಾಟನೆ ನಂತರ ಭೈರವೈಕ್ಯ ಬಾಲಗಂಗಾಧರನಾಥ ಸ್ವಾಮೀಜಿಗಳ ಮೂರ್ತಿಗೆ ಮೋದಿ ಪುಷ್ಪಾರ್ಚನೆ ಸಲ್ಲಿಸಿ, ಮಂದಿರದ ವೀಕ್ಷಣೆ ನಡೆಸಿದರು. ಈ ವೇಳೆ ಕೇಂದ್ರ ಸಚಿವರಾದ ಎಚ್‌.ಡಿ. ಕುಮಾರಸ್ವಾಮಿ ಮತ್ತು ಶೋಭಾ ಕರಂದ್ಲಾಜೆ ಪ್ರಧಾನಿಗೆ ಸಾಥ್ ನೀಡಿದರು.

ಬೈಸಾಖಿ ಸಂಭ್ರಮದಲ್ಲಿ ದುರಂತ: ಭಕ್ತರ ಬಸ್ ಪಲ್ಟಿ – 6 ಸಾವು, 21 ಮಂದಿಗೆ ಗಾಯ

0

ಪಂಜಾಬ್‌: ಫತೇಘರ್ ಸಾಹಿಬ್ ಜಿಲ್ಲೆಯಲ್ಲಿ ಭಕ್ತರನ್ನು ಕರೆದೊಯ್ಯುತ್ತಿದ್ದ ಬಸ್ ಪಲ್ಟಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಈ ದುರಂತದಲ್ಲಿ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, 21 ಮಂದಿ ಗಾಯಗೊಂಡಿದ್ದಾರೆ.

ಈ ಘಟನೆ ಬಸ್ಸಿ ಪಠಾಣಾ ಪ್ರದೇಶದ ಮೊರಿಂಡಾ-ಚುನ್ನಿ ರಸ್ತೆಯ ಹಿಮ್ಮತ್‌ಪುರ ಗ್ರಾಮದ ಬಳಿ ಮಂಗಳವಾರ ರಾತ್ರಿ ಸುಮಾರು 10 ಗಂಟೆಗೆ ನಡೆದಿದೆ. ಬೈಸಾಖಿ ಹಬ್ಬದ ಅಂಗವಾಗಿ ಆನಂದಪುರ ಸಾಹಿಬ್ ಗೆ ತೆರಳಿ ಪೂಜೆ ಸಲ್ಲಿಸಿ ವಾಪಸ್ ಆಗುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.

ಮಾಹಿತಿ ತಿಳಿದ ತಕ್ಷಣ ಪೊಲೀಸರು ಹಾಗೂ ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ತುರ್ತು ರಕ್ಷಣಾ ಕಾರ್ಯಾಚರಣೆ ನಡೆಸಿದರು. ಗಾಯಾಳುಗಳನ್ನು ತಕ್ಷಣ ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಪೊಲೀಸರ ಮಾಹಿತಿ ಪ್ರಕಾರ, ಬಸ್ ಅತಿವೇಗದಿಂದ ಸಾಗುತ್ತಿದ್ದಾಗ ನಿಯಂತ್ರಣ ತಪ್ಪಿ ರಸ್ತೆ ಬಿಟ್ಟು ಪಕ್ಕಕ್ಕೆ ಉರುಳಿ ಬಿದ್ದಿದೆ. ಮೃತರಲ್ಲಿ ಒಬ್ಬ ಮಹಿಳೆ ಸೇರಿದ್ದು, ಎಲ್ಲಾ ಪ್ರಯಾಣಿಕರು ಫತೇಘರ್ ಸಾಹಿಬ್ ಜಿಲ್ಲೆಯ ಮೈನ್ ಮಜ್ರಿ ಗ್ರಾಮದವರಾಗಿದ್ದಾರೆ.

ಘಟನೆ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

ಸಂವಿಧಾನದಿಂದ ಬದುಕು ಬದಲಾವಣೆ, ಸಮಾನತೆಗೆ ಹೋರಾಟ ಅಗತ್ಯ – ಶಾಸಕ ಕೆ. ನೇಮಿರಾಜ್ ನಾಯ್ಕ

0

ಹಗರಿಬೊಮ್ಮನಹಳ್ಳಿ: ಅಂಬೇಡ್ಕರ್ ಅವರು ಅನುಭವಿಸಿದ ಅನ್ಯಾಯ, ಅಪಮಾನ ಹಾಗೂ ಶೋಷಣೆಯ ನಡುವೆ ತಮ್ಮ ಅಧ್ಯಯನ ಮತ್ತು ಪರಿಶ್ರಮದಿಂದ ಸಂವಿಧಾನ ರೂಪಿಸಿ ಸಮಾಜದ ಬದುಕಿನಲ್ಲಿ ಮಹತ್ತರ ಬದಲಾವಣೆ ತಂದಿದ್ದಾರೆ. ಆದರೂ ಸಮಾನತೆ ಸಂಪೂರ್ಣವಾಗಿ ಸಾಧಿಸಲು ಇನ್ನೂ ಹೋರಾಟ ಅಗತ್ಯವಾಗಿದೆ ಎಂದು ಶಾಸಕ ಕೆ. ನೇಮಿರಾಜ್ ನಾಯ್ಕ ಹೇಳಿದರು.

ಪಟ್ಟಣದ ರಾಮನಗರದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದ ಬಳಿ ತಾಲೂಕು ಆಡಳಿತ, ಸಮಾಜ ಕಲ್ಯಾಣ ಇಲಾಖೆ ಹಾಗೂ ಪುರಸಭೆ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಹಾಗೂ ಬಾಬು ಜಗಜೀವನ್ ರಾಮ್ ಅವರ 119ನೇ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಡಾ. ಬಾಬು ಜಗಜೀವನ್ ರಾಮ್ ಹಸಿರು ಕ್ರಾಂತಿಯ ಹರಿಕಾರರಾಗಿದ್ದು, ದೀನ–ದಲಿತ ಹಾಗೂ ಹಿಂದುಳಿದ ವರ್ಗಗಳ ಏಳಿಗೆಗಾಗಿ ಹೋರಾಡಿದ ಮಹನೀಯರು ಎಂದು ಹೇಳಿದರು.

ತಾಲೂಕು ದಂಡಾಧಿಕಾರಿ ಕವಿತಾ ಆರ್, ಮಾತನಾಡಿ, ಸಂವಿಧಾನವು ಪ್ರತಿಯೊಬ್ಬರ ಬದುಕಿಗೆ ದಿಕ್ಸೂಚಿಯಾಗಿದ್ದು, ಅದನ್ನು ಸದುಪಯೋಗಪಡಿಸಿಕೊಳ್ಳುವುದು ಎಲ್ಲರ ಕರ್ತವ್ಯ ಎಂದು ಹೇಳಿದರು. ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಪಾಲಯ್ಯ ವಿಶ್ವನಾಥ ಅವರು ಅಂಬೇಡ್ಕರ್ ಹಾಗೂ ಜಗಜೀವನ್ ರಾಮ್ ಅವರ ತತ್ವ–ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಮುಖ್ಯ ಭಾಷಣಕಾರರಾಗಿ ಆಗಮಿಸಿದ್ದ ದಲಿತ ಸಂಘರ್ಷ ಸಮಿತಿಯ ತಾಲೂಕು ಅಧ್ಯಕ್ಷ ಗದ್ದಿಕೆರೆ ದೊಡ್ಡ ಬಸಪ್ಪ ಮಾತನಾಡಿ, ಮೀಸಲಾತಿ ಪರಿಕಲ್ಪನೆಯ ಮೂಲಕ ದೀನ–ದಲಿತ ವರ್ಗಗಳಿಗೆ ರಾಜಕೀಯ ಹಾಗೂ ಆಡಳಿತ ಕ್ಷೇತ್ರದಲ್ಲಿ ಅವಕಾಶ ದೊರಕಿದ್ದು, ಇಂತಹ ಮಹನೀಯರನ್ನು ಸದಾ ಸ್ಮರಿಸಬೇಕು ಎಂದು ಹೇಳಿದರು.

ಕಾರ್ಯಕ್ರಮದ ವೇಳೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಜಗದೀಶ್ ಅವರು ಭಾರತ ಸಂವಿಧಾನದ ಪ್ರಸ್ತಾವನೆಯನ್ನು ಬೋಧಿಸಿದರು. ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ 2025–26ನೇ ಸಾಲಿನಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಪ್ರಶಸ್ತಿ ಪತ್ರಗಳನ್ನು ವಿತರಿಸಲಾಯಿತು.

ಕಾರ್ಯಕ್ರಮಕ್ಕೂ ಮುನ್ನ ಬಸವೇಶ್ವರ ಬಜಾರ್ ಮುಖ್ಯ ಬೀದಿಗಳಲ್ಲಿ ಅಂಬೇಡ್ಕರ್ ಹಾಗೂ ಜಗಜೀವನ್ ರಾಮ್ ಅವರ ಭಾವಚಿತ್ರಗಳನ್ನು ಹೊತ್ತ ಬೆಳ್ಳಿ ರಥದಲ್ಲಿ ತಾಳ–ಮದ್ದಲೆ ಹಾಗೂ ವಾದ್ಯಗಳೊಂದಿಗೆ ಭವ್ಯ ಮೆರವಣಿಗೆ ನಡೆಸಲಾಯಿತು. ಸಾಂಸ್ಕೃತಿಕ ಕಾರ್ಯಕ್ರಮಗಳಾಗಿ ಶಾರದಾ ಮತ್ತು ಸೋಮನಾಥ ತಂಡದಿಂದ ಪ್ರಾರ್ಥನೆ ಹಾಗೂ ರೈತ ಗೀತೆಗಳು, ಮಾಂತೇಶ್ ಕಲಾ ತಂಡದಿಂದ ಅಂಬೇಡ್ಕರ್ ಕುರಿತ ಹಾಡುಗಳು ಗಮನಸೆಳೆಯುವಂತಾಗಿದ್ದವು.

ಕಾರ್ಯಕ್ರಮದಲ್ಲಿ ವೃತ್ತ ಪೊಲೀಸ್ ನಿರೀಕ್ಷಕ ವಿಕಾಸ್ ಲಮಾಣಿ, ಜೆಡಿಎಸ್ ಜಿಲ್ಲಾಧ್ಯಕ್ಷ ಬದಾಮಿ ಮೃತ್ಯುಂಜಯ, ಕಾಂಗ್ರೆಸ್ ಮುಖಂಡ ಹೆಗ್ಡಾಳ್ ರಾಮಣ್ಣ, ಆನಂದಳ್ಳಿ ಪ್ರಭಾಕರ, ದಲಿತ ಮುಖಂಡ ಎ. ಮಹೇಶ್, ಪುರಸಭೆ ಸದಸ್ಯ ಗಣೇಶ್, ವಕೀಲ ಸಿ. ಬಸವರಾಜ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಕಾರ್ಯಕ್ರಮದ ಆರಂಭದಲ್ಲಿ ಪ್ರಸ್ತಾವನೆ ಪಠಣದ ವಿಚಾರವಾಗಿ ಕ್ಷಣಿಕ ಗೊಂದಲ ಉಂಟಾದರೂ, ಬಳಿಕ ಅದನ್ನು ಸರಿಪಡಿಸಿ ಕಾರ್ಯಕ್ರಮವನ್ನು ಮುಂದುವರಿಸಲಾಯಿತು. ತೀವ್ರ ಬಿಸಿಲಿನ ನಡುವೆಯೂ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜನರಿಗೆ ತಾಲೂಕು ರೆಡ್ಡಿ ಸಂಘದ ಬಸವರಾಜ್ ರೆಡ್ಡಿ ಅವರು ಕುಡಿಯುವ ನೀರಿನ ವ್ಯವಸ್ಥೆ ಮಾಡಿದ್ದು ಗಮನಾರ್ಹವಾಗಿತ್ತು.

error: Content is protected !!