Home Blog

Hassan News: ಹಾಸನ NSUI ಜಿಲ್ಲಾಧ್ಯಕ್ಷ ವರುಣ್ ಆತ್ಮಹತ್ಯೆ; ಕೌಟುಂಬಿಕ ಕಲಹ ಶಂಕೆ?

0

ಹಾಸನ: ಹಾಸನ ಜಿಲ್ಲಾ NSUI ಅಧ್ಯಕ್ಷ ವರುಣ್.ಎಂ.ಟಿ. (22) ಅವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೇಲೂರು ಪಟ್ಟಣದ ಹೊಳೆ ಬೀದಿಯಲ್ಲಿ ನಡೆದಿದೆ.

ಮನೆಯ ಕೊಠಡಿಯಲ್ಲಿ ವರುಣ್ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕೌಟುಂಬಿಕ ಕಲಹವೇ ಘಟನೆಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ.

ಮಾಳೇಗೆರೆ ಗ್ರಾಮದ ತಾರಾನಾಥ್ ಹಾಗೂ ಲೋಲಾಕ್ಷಿ ದಂಪತಿಯ ಎರಡನೇ ಪುತ್ರರಾಗಿದ್ದ ವರುಣ್.ಎಂ.ಟಿ. ಅವರನ್ನು ಕಳೆದ ಜುಲೈ ತಿಂಗಳಲ್ಲಿ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ಹಾಸನ ಜಿಲ್ಲಾಧ್ಯಕ್ಷರಾಗಿ ನೇಮಕ ಮಾಡಲಾಗಿತ್ತು.

ಕುಟುಂಬದಲ್ಲಿ ಕಲಹ ಉಂಟಾದ ಹಿನ್ನೆಲೆಯಲ್ಲಿ ವರುಣ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದ್ದು, ನಿಖರ ಕಾರಣ ತನಿಖೆಯಿಂದ ತಿಳಿದುಬರಬೇಕಿದೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಬೇಲೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇನ್ನು, ಸುಮಾರು ಮೂರು ವರ್ಷಗಳ ಹಿಂದೆ ವರುಣ್ ಅವರ ಸಹೋದರ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದರು ಎಂದು ತಿಳಿದುಬಂದಿದೆ. ಇದೀಗ ಮತ್ತೊಬ್ಬ ಪುತ್ರನನ್ನೂ ಕಳೆದುಕೊಂಡಿರುವ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.

ವರುಣ್ ಅವರ ನಿಧನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಸಂತಾಪ ಸೂಚಿಸಿದ್ದಾರೆ. ಘಟನೆ ಬೇಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪ್ರಕರಣದ ಕುರಿತು ತನಿಖೆ ಮುಂದುವರಿಸಿದ್ದಾರೆ.

Nelamangala News: ಕಲ್ಲು ಗಣಿಗಾರಿಕೆಗೆ ಅಕ್ರಮ ಸ್ಫೋಟಕ ಮಾರಾಟ? 600 ಜಿಲೆಟಿನ್ ಕಡ್ಡಿ ವಶ, ಆರೋಪಿ ಅರೆಸ್ಟ್

0

ನೆಲಮಂಗಲ: ಕಾರಿನಲ್ಲಿ ಅಕ್ರಮವಾಗಿ ಸ್ಫೋಟಕಗಳನ್ನು ಸಾಗಿಸುತ್ತಿದ್ದ ಪ್ರಕರಣವನ್ನು ದಾಬಸ್‌ಪೇಟೆ ಪೊಲೀಸರು ಭೇದಿಸಿದ್ದು, ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಜಾಜೂರು ಬಳಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.

ಡಿಎಸ್‌ಪಿ ಉಮಾರಾಣಿ ಅವರ ಮಾರ್ಗದರ್ಶನದಲ್ಲಿ ದಾಬಸ್‌ಪೇಟೆ ಪೊಲೀಸರು ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ್ದು, ಕಾರಿನಲ್ಲಿ ಸ್ಫೋಟಕಗಳನ್ನು ಸಾಗಿಸುತ್ತಿದ್ದ ಶಿವಶಂಕರ್ ಅಲಿಯಾಸ್ ಆಟೋ ಶಂಕರ್ (38) ಎಂಬಾತನನ್ನು ಬಂಧಿಸಿದ್ದಾರೆ.

ಆರೋಪಿಯು ದಾಬಸ್‌ಪೇಟೆ ಸುತ್ತಮುತ್ತಲಿನ ಕಲ್ಲು ಗಣಿಗಾರಿಕೆ ಚಟುವಟಿಕೆಗಳಿಗೆ ಪರವಾನಗಿ ಪಡೆಯದೆ, ಕಡಿಮೆ ಬೆಲೆಗೆ ಸ್ಫೋಟಕಗಳನ್ನು ಮಾರಾಟ ಮಾಡುವ ಉದ್ದೇಶದಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಎನ್ನಲಾಗಿದೆ.

ಕಾರಿನಲ್ಲಿ ಸಾಗಿಸುತ್ತಿದ್ದ 600 ಜಿಲೆಟಿನ್ ಕಡ್ಡಿಗಳು ಹಾಗೂ 100 ಡಿಟೋನೇಟರ್‌ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಸ್ಫೋಟಕ ಸಾಗಾಟಕ್ಕೆ ಬಳಸಿದ್ದ ಕಾರನ್ನೂ ಜಪ್ತಿ ಮಾಡಿದ್ದಾರೆ.

ಈ ಸಂಬಂಧ ದಾಬಸ್‌ಪೇಟೆ ಪೊಲೀಸ್ ಠಾಣೆಯಲ್ಲಿ ಸ್ಫೋಟಕ ವಸ್ತುಗಳ ಕಾಯ್ದೆ, 1908 ಹಾಗೂ ಬಿಎನ್‌ಎಸ್ ಸೆಕ್ಷನ್ 288ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ದೆಹಲಿಯಲ್ಲಿ ಧಾರಾಕಾರ ಮಳೆ; ಇಂದಿರಾ ಗಾಂಧಿ ವಿಮಾನ ನಿಲ್ದಾಣ ಜಲಾವೃತ, ವಿಮಾನ ಸಂಚಾರ ಅಸ್ತವ್ಯಸ್ತ

0

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಶುಕ್ರವಾರ ಧಾರಾಕಾರ ಮಳೆಯಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.

ಭಾರಿ ಮಳೆಯಿಂದಾಗಿ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕೆಲ ಪ್ರದೇಶಗಳು ಜಲಾವೃತಗೊಂಡಿದ್ದು, ಪ್ರಯಾಣಿಕರು ಪರದಾಡುವಂತಾಗಿದೆ.

ವಿಮಾನ ನಿಲ್ದಾಣದ ಒಳಗೆ ಮಳೆ ನೀರು ನುಗ್ಗಿದ್ದು, ನೀರನ್ನು ತೆರವುಗೊಳಿಸಲು ಸಿಬ್ಬಂದಿ ಹರಸಾಹಸಪಟ್ಟರು. ಕೆಲವೆಡೆ ಮೊಣಕಾಲು ಎತ್ತರದವರೆಗೆ ನೀರು ನಿಂತಿದ್ದರಿಂದ ವಿಮಾನ ನಿಲ್ದಾಣದೊಳಗೆ ಸಂಚರಿಸಲು ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸಿದರು.

ಧಾರಾಕಾರ ಮಳೆಯ ಪರಿಣಾಮ ದೆಹಲಿಯ ವಿಮಾನ ಸಂಚಾರದ ಮೇಲೂ ಗಂಭೀರ ಪರಿಣಾಮ ಬೀರಿದೆ. ಅಹಮದಾಬಾದ್, ಮುಂಬೈ, ಪೋರ್ಟ್ ಬ್ಲೇರ್ ಸೇರಿದಂತೆ ವಿವಿಧ ನಗರಗಳಿಂದ ದೆಹಲಿಗೆ ಆಗಮಿಸಬೇಕಿದ್ದ ಹಲವು ವಿಮಾನಗಳ ಸಂಚಾರದಲ್ಲಿ ವಿಳಂಬವಾಗಿದೆ.

ಭಾರಿ ಮಳೆಯಿಂದಾಗಿ ದೆಹಲಿಯ ಹಲವು ಪ್ರದೇಶಗಳಲ್ಲಿ ನೀರು ನಿಂತಿದ್ದು, ವಾಹನ ಸಂಚಾರಕ್ಕೂ ಅಡ್ಡಿಯಾಗಿದೆ. ರಸ್ತೆಗಳು ಜಲಾವೃತಗೊಂಡಿರುವ ಹಿನ್ನೆಲೆಯಲ್ಲಿ ವಾಹನ ಸವಾರರು ಹಾಗೂ ಸಾರ್ವಜನಿಕರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ.

ಈ ನಡುವೆ ಹವಾಮಾನ ಇಲಾಖೆ ದೆಹಲಿಯಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.

Bengaluru Traffic: ಎಲ್ಲೆಂದರಲ್ಲಿ ವಾಹನ ನಿಲ್ಲಿಸಿದರೆ ಟೋಯಿಂಗ್! ಬೆಂಗಳೂರಿನಲ್ಲಿ ಕಾರ್ಯಾಚರಣೆ ಶುರು!

0

ಬೆಂಗಳೂರು: ನಗರದ ರಸ್ತೆಗಳಲ್ಲಿ ಎಲ್ಲೆಂದರಲ್ಲಿ ವಾಹನಗಳನ್ನು ನಿಲ್ಲಿಸುವವರಿಗೆ ಸಂಚಾರ ಪೊಲೀಸರು ಕಠಿಣ ಎಚ್ಚರಿಕೆ ನೀಡಿದ್ದಾರೆ.

ಅಕ್ರಮ ಪಾರ್ಕಿಂಗ್ ವಿರುದ್ಧದ ಟೋಯಿಂಗ್ ಕಾರ್ಯಾಚರಣೆಯನ್ನು ಮತ್ತೆ ಆರಂಭಿಸಿರುವ ಪೊಲೀಸರು, ನಿಯಮ ಉಲ್ಲಂಘಿಸಿ ನಿಲ್ಲಿಸಿರುವ ವಾಹನಗಳನ್ನು ತೆರವುಗೊಳಿಸುತ್ತಿದ್ದಾರೆ.

ಕಳೆದ ಒಂದು ವಾರದಿಂದ ನಗರದ ಹಲವೆಡೆ ಟೋಯಿಂಗ್ ಕಾರ್ಯಾಚರಣೆ ತೀವ್ರಗೊಂಡಿದ್ದು, ವಿಶೇಷವಾಗಿ ಶಾಂತಿನಗರ ಸುತ್ತಮುತ್ತ ಅಕ್ರಮವಾಗಿ ನಿಲ್ಲಿಸಿರುವ ವಾಹನಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ. ರಸ್ತೆ ಬದಿಗಳಲ್ಲಿ ಹಾಗೂ ನೋ ಪಾರ್ಕಿಂಗ್ ವಲಯಗಳಲ್ಲಿ ವಾಹನಗಳನ್ನು ನಿಲ್ಲಿಸುವುದರಿಂದ ಸಂಚಾರಕ್ಕೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮಕ್ಕೆ ಮುಂದಾಗಲಾಗಿದೆ.

ಶಾಂತಿನಗರದ ಸೇಂಟ್ ಜೋಸೆಫ್ ಕಾಲೇಜು ಮತ್ತು ದಿವ್ಯಶ್ರೀ ಚೇಂಬರ್ಸ್ ಸಮೀಪ ನೋ ಪಾರ್ಕಿಂಗ್ ಫಲಕಗಳನ್ನು ಅಳವಡಿಸಲಾಗಿದೆ. ಆದರೂ ನಿಯಮ ಉಲ್ಲಂಘಿಸಿ ವಾಹನಗಳನ್ನು ನಿಲ್ಲಿಸಲಾಗುತ್ತಿರುವ ಹಿನ್ನೆಲೆಯಲ್ಲಿ ಸಂಚಾರ ಪೊಲೀಸರು ಟೋಯಿಂಗ್ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಅಕ್ರಮವಾಗಿ ನಿಲ್ಲಿಸಿರುವ ದ್ವಿಚಕ್ರ ವಾಹನಗಳಿಗೆ 1,150 ರೂ. ಹಾಗೂ ನಾಲ್ಕು ಚಕ್ರದ ವಾಹನಗಳಿಗೆ 1,500 ರೂ. ದಂಡ ವಿಧಿಸಲಾಗುತ್ತಿದೆ. ಟೋಯಿಂಗ್ ಶುಲ್ಕ ಸೇರಿದಂತೆ ನಿಯಮ ಉಲ್ಲಂಘನೆಗೆ ಸಂಬಂಧಿಸಿದ ದಂಡವನ್ನು ವಾಹನ ಮಾಲೀಕರು ಪಾವತಿಸಬೇಕಾಗುತ್ತದೆ.

ಅಶೋಕ್ ನಗರ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮ ಪಾರ್ಕಿಂಗ್ ಕುರಿತು ಸಾರ್ವಜನಿಕರಿಂದ ವ್ಯಾಪಕ ದೂರುಗಳು ಬಂದಿದ್ದವು. ಈ ಹಿನ್ನೆಲೆಯಲ್ಲಿ ಸಂಚಾರಕ್ಕೆ ಅಡ್ಡಿಯಾಗುವಂತೆ ರಸ್ತೆ ಬದಿಗಳಲ್ಲಿ ನಿಲ್ಲಿಸಿರುವ ವಾಹನಗಳ ವಿರುದ್ಧ ಪೊಲೀಸರು ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ.

ನಗರದ ಪ್ರಮುಖ ರಸ್ತೆಗಳಲ್ಲಿ ಅಕ್ರಮ ಪಾರ್ಕಿಂಗ್‌ನಿಂದ ಉಂಟಾಗುತ್ತಿರುವ ಸಂಚಾರ ದಟ್ಟಣೆಗೆ ಕಡಿವಾಣ ಹಾಕುವ ಉದ್ದೇಶದಿಂದ ಈ ಕಾರ್ಯಾಚರಣೆಯನ್ನು ಮತ್ತಷ್ಟು ತೀವ್ರಗೊಳಿಸುವ ಸಾಧ್ಯತೆ ಇದೆ. ಆದ್ದರಿಂದ ವಾಹನ ಸವಾರರು ನೋ ಪಾರ್ಕಿಂಗ್ ಪ್ರದೇಶಗಳಲ್ಲಿ ವಾಹನಗಳನ್ನು ನಿಲ್ಲಿಸದಂತೆ ಹಾಗೂ ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.

2026-27ನೇ ಸಾಲಿನ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟ: ವಿವಿಧ ಜಿಲ್ಲೆಗಳ 31 ಗುರುಗಳಿಗೆ ಸನ್ಮಾನ

0

ಬೆಂಗಳೂರು: 2026-27ನೇ ಸಾಲಿನ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ಘೋಷಿಸಿದೆ. ಶಿಕ್ಷಕರ ದಿನಾಚರಣೆಯ ಅಂಗವಾಗಿ ಸೆಪ್ಟೆಂಬರ್ 5ರಂದು ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದ್ದು, ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗ ಸೇರಿದಂತೆ ವಿವಿಧ ವಿಭಾಗಗಳ ಶಿಕ್ಷಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಪ್ರಾಥಮಿಕ ಶಾಲಾ ವಿಭಾಗದಲ್ಲಿ ಒಟ್ಟು 20 ಶಿಕ್ಷಕರು ಹಾಗೂ ಪ್ರೌಢಶಾಲಾ ವಿಭಾಗದಲ್ಲಿ 11 ಶಿಕ್ಷಕರು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ವಿಶೇಷ ಶಿಕ್ಷಕರ ವಿಭಾಗದಲ್ಲಿಯೂ ಒಬ್ಬ ಶಿಕ್ಷಕರನ್ನು ಆಯ್ಕೆ ಮಾಡಲಾಗಿದೆ.

ಪ್ರಾಥಮಿಕ ಶಾಲಾ ಶಿಕ್ಷಕರು

  1. ದೇವನಹಳ್ಳಿ ತಾಲೂಕಿನ ಕೆಂಪತಿಮ್ಮನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಿ. ಉಮಾ
  2. ಚಿಕ್ಕೋಡಿ–ಮೂಡಲಗಿ ಶೈಕ್ಷಣಿಕ ವಲಯದ ಕೆ.ಹೆಚ್.ಪಿ.ಎಸ್. ಹಲ್ಲೂರು ಕ್ರಾಸ್ ಶಾಲೆಯ ಬಸಪ್ಪ ಪರಪ್ಪ ಪಾಟೀಲ
  3. ಕುಂದಾಪುರ ತಾಲೂಕಿನ ಹೆಸಕುತ್ತೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಶೋಕ
  4. ದೇವದುರ್ಗ ತಾಲೂಕಿನ ಸರ್ಕಾರಿ ಗುಂಡೇರದೊಡ್ಡಿ ಕಿರಿಯ ಪ್ರಾಥಮಿಕ ಶಾಲೆಯ ಸುರೇಶ್ ಕೆ.
  5. ವಿಜಯಪುರ ತಾಲೂಕಿನ ಕೆಂಗಲಗುತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಣಮಂತ ಕಲ್ಲಪ್ಪ ಕಾತರಕಿ
  6. ಹೊನ್ನಾವರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಉಷಾ ವಿ. ನಾಯಕ್
  7. ಚಿಂತಾಮಣಿ ತಾಲೂಕಿನ ಗುಟ್ಟಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮಸ್ತಾನ್ ವಲಿ
  8. ಬೆಳಗಾವಿ ಗ್ರಾಮಾಂತರ ತಾಲೂಕಿನ ಜಾಫರವಾಡಿ ಮರಾಠಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಪ್ರಭಾವತಿ ಬಾಳಪ್ಪ ಹಾಲೆನ್ನವರ
  9. ಕೊಳ್ಳೇಗಾಲ ಸತ್ತೇಗಾಲ ಅಗ್ರಹಾರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸರೋಜಮ್ಮ
  10. ಆಳಂದ ತಾಲೂಕಿನ ಗುಂಜಬಬಲಾದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ನಿಂಗಪ್ಪ
  11. ಬೆಂಗಳೂರು ದಕ್ಷಿಣ ವಲಯದ ಕೆಂಬತ್ತಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ರತ್ನಮ್ಮ ಎನ್.ಎಂ.
  12. ಜಮಖಂಡಿ–ತೇರದಾಳದ ಶ್ರೀ ಜಿನಸೇನಾಚಾರ್ಯ ಹಿರಿಯ ಪ್ರಾಥಮಿಕ ಶಾಲೆಯ ನೇಮಣ್ಣ ಬಮ್ಮಣ್ಣ ಜಮಖಂಡಿ
  13. ಯಲ್ಲಾಪುರ ಗಣಪತಿಗಲ್ಲಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ರಾಮಚಂದ್ರ ಈ. ನಾಯ್ಕ
  14. ಕೊರಟಗೆರೆ ತಾಲೂಕಿನ ಮುದಿಗೌಡನಹನಹಟ್ಟಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮಾಲಿನಿ ಎಂ.
  15. ಶಿಕಾರಿಪುರ ತಾಲೂಕಿನ ಚಿಕ್ಕಮಾಗಡಿ ತಾಂಡದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕುಮಾರನಾಯ್ಕ ಬಿ.ಡಿ.
  16. ಬೆಂಗಳೂರು ಉತ್ತರ ವಲಯದ ಗೃಹಲಕ್ಷ್ಮೀ ಬಡಾವಣೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಕೃಷ್ಣಮೂರ್ತಿ ಕೆ.ಎಸ್.
  17. ಹೊನ್ನಾಳಿಯ ಸದಾಶಿವಪುರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮಲ್ಲಿಕಾರ್ಜುನ ಬಡಿಗೇರ
  18. ತುರುವೇಕೆರೆಯ ಹೆಗ್ಡೆರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರೇಮಕುಮಾರ್ ವಿ.ಎಸ್.
  19. ಸಿರಗುಪ್ಪದ ಕೊಂಚಿಗೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯ ದುರಗಪ್ಪ ಎಚ್.
  20. ಗಂಗಾವತಿಯ ಹನವಾಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೈಲಾರಪ್ಪ ಬೂದಿಹಾಳ

ಪ್ರೌಢಶಾಲಾ ಶಿಕ್ಷಕರು

  1. ಹಳಿಯಾಳ ಚಿಬ್ಬಲಗೇರಿ ಸರ್ಕಾರಿ ಪ್ರೌಢಶಾಲೆಯ ಬಿರಾದಾರ ಸಿದ್ದಪ್ಪ ವೀರಭದ್ರಪ್ಪ
  2. ಜೀವನ್ ಭೀಮಾನಗರ, ಬೆಂಗಳೂರು ದಕ್ಷಿಣ ವಲಯ-4ರ ಕರ್ನಾಟಕ ಪಬ್ಲಿಕ್ ಶಾಲೆಯ ಶೈನಾಕುಮಾರಿ ಎಂ.
  3. ಶಿವಮೊಗ್ಗದ ತಮ್ಮಡಿಹಳ್ಳಿ ಸರ್ಕಾರಿ ಪ್ರೌಢಶಾಲೆಯ ಕುಬೇರನಾಯ್ಕ ಬಿ.
  4. ದೇವನಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕ ನೀಲಕಂಠ ಗಾವಂಕರ್
  5. ಬಾಗೇಪಲ್ಲಿ ಗೂಳೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ವಿ. ವೆಂಕಟೇಶ
  6. ಕುಮಟದ ಅಘನಾಶಿನಿ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಮಮತಾ ಆರ್. ನಾಯ್ಕ
  7. ಬಂಟ್ವಾಳದ ಮೋದನಕಾಪು ಕಾರ್ಮೆಲ್ ಹೈಸ್ಕೂಲ್‌ನ ರೋಶನ್ ಅಲೆಕ್ಸಾಂಡರ್
  8. ಮೈಸೂರು ದಕ್ಷಿಣ ತಾಲೂಕಿನ ಸರ್ಕಾರಿ ಆದರ್ಶ ವಿದ್ಯಾಲಯದ ದೈಹಿಕ ಶಿಕ್ಷಕ ಜಯಶೀಲ
  9. ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕಿನ ಮುತ್ತಿನಕೊಪ್ಪ ಸರ್ಕಾರಿ ಪ್ರೌಢಶಾಲೆಯ ಮಥಾಯಿ ಟಿ.
  10. ದಾವಣಗೆರೆ ತಾಲೂಕಿನ ನಿಟ್ಟುವಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಜಯಪ್ಪ ಕೆ.ಟಿ.

ವಿಶೇಷ ಶಿಕ್ಷಕ

  1. ವಿಜಯಪುರ ಗ್ರಾಮಾಂತರ ತಾಲೂಕಿನ ಟಕ್ಕಲಕಿ ಸರ್ಕಾರಿ ಪ್ರೌಢಶಾಲೆಯ ವಿಶೇಷ ಶಿಕ್ಷಕ ಆನಂದ ಮಾದೇವ ಝಂಡೆ.

ಗ್ರಾಮ ಪಂಚಾಯಿತಿ ಕೆರೆ ಒತ್ತುವರಿ ಮಾಡಿದರೆ ಕ್ರಿಮಿನಲ್ ಕೇಸ್: ಕೆರೆ ಒತ್ತುವರಿದಾರರಿಗೆ ಈಶ್ವರ್ ಖಂಡ್ರೆ ಖಡಕ್ ಎಚ್ಚರಿಕೆ!

0

ಬೆಂಗಳೂರು: ಗ್ರಾಮ ಪಂಚಾಯತಿಗೆ ಸೇರಿದ ಮತ್ತು ನಿರ್ವಹಿಸುತ್ತಿರುವ ಯಾವುದೇ ಕೆರೆಯನ್ನು ಒತ್ತುವರಿ ಮಾಡಿದ್ದರೆ ನಿರ್ದಾಕ್ಷಿಣ್ಯವಾಗಿ ತೆರವು ಮಾಡಿಸಲಾಗುವುದು ಮತ್ತು ಒತ್ತುವರಿದಾರರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಬಿ. ಖಂಡ್ರೆ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಇಂದು (ಸೆಪ್ಟೆಂಬರ್ 4) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ದೇಶದಲ್ಲೇ ಎರಡನೇ ಅತಿ ಹೆಚ್ಚು ಬರಡು ಭೂಮಿ ಇರುವ ರಾಜ್ಯವಾಗಿದ್ದು, ಗ್ರಾಮೀಣ ಪ್ರದೇಶಕ್ಕೆ ಕುಡಿಯುವ ನೀರು ಪೂರೈಕೆ ದೊಡ್ಡ ಸವಾಲಾಗಿದೆ ಎಂದು ಹೇಳಿದರು. ರಾಜ್ಯದ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ 32,504 ಕೆರೆಗಳಿದ್ದು, ಈ ಪೈಕಿ 11,498 ಕೆರೆಗಳು ಒತ್ತುವರಿಯಾಗಿದ್ದವು. ಇವುಗಳಲ್ಲಿ 6,670 ಕೆರೆ ಒತ್ತುವರಿಯನ್ನು ತೆರವುಗೊಳಿಸಲಾಗಿದ್ದು, ಇನ್ನೂ 4,828 ಕೆರೆಗಳ 11,671 ಎಕರೆ ಒತ್ತುವರಿ ತೆರವುಗೊಳಿಸಬೇಕಿದೆ ಎಂದು ಸಚಿವರು ತಿಳಿಸಿದರು.

ಕೂಡಲೇ ಕೆರೆ ಒತ್ತುವರಿ ತೆರವಿಗೆ ಸೂಚನೆ ನೀಡಲಾಗಿದ್ದು, ಇನ್ನು ಮುಂದೆ ಯಾರೇ ಹೊಸದಾಗಿ ಕೆರೆ ಒತ್ತುವರಿ ಮಾಡಿದರೂ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು ಎಂದು ಖಂಡ್ರೆ ಎಚ್ಚರಿಕೆ ನೀಡಿದರು.

ಜಲಶಕ್ತಿ ಸಚಿವಾಲಯ ದೆಹಲಿಯಲ್ಲಿ ಆಯೋಜಿಸಿದ್ದ ಎರಡು ದಿನಗಳ ಸುಸ್ಥಿರ ಜಲ ಕುರಿತ ಇಲಾಖಾ ಶೃಂಗಸಭೆಯಲ್ಲಿ ಭಾಗವಹಿಸಿ, ಪ್ರಧಾನಮಂತ್ರಿಗಳ ಸಮ್ಮುಖದಲ್ಲಿ ರಾಜ್ಯ ಸರ್ಕಾರ ಜಲ ಸಂರಕ್ಷಣೆಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಪ್ರಾತ್ಯಕ್ಷಿಕೆ ಪ್ರಸ್ತುತಪಡಿಸಿದ್ದಾಗಿ ಸಚಿವರು ತಿಳಿಸಿದರು.

ರಾಜ್ಯದ ಬಹುತೇಕ ಕಡೆ ಭೂಮಿಯೊಳಗೆ ಹೆಬ್ಬಂಡೆಗಳು ಮತ್ತು ಲ್ಯಾಟರೈಟ್ ಇರುವ ಕಾರಣ ಮಳೆ ನೀರು ಇಂಗದೆ ಅಂತರ್ಜಲ ಕುಸಿಯುತ್ತಿದೆಯೆಂದೂ, ಅತಿಯಾದ ಅಂತರ್ಜಲ ಬಳಕೆಯಿಂದಲೂ ಭೂಮಿಯೊಳಗಿನ ಜಲಮಟ್ಟ ಕುಸಿದಿದೆಯೆಂದೂ ಖಂಡ್ರೆ ಆತಂಕ ವ್ಯಕ್ತಪಡಿಸಿದರು. ಮುಂದಿನ ದಿನಗಳಲ್ಲಿ ಮೇಲ್ಮೈ ಜಲ ಮೂಲಗಳೇ ಜೀವನಾಧಾರವಾಗಲಿದ್ದು, ಕೆರೆ, ಕಟ್ಟೆ, ಸರೋವರ, ನದಿಗಳನ್ನು ಸಂರಕ್ಷಿಸದಿದ್ದರೆ ಜಲಕ್ಷಾಮ ಎದುರಾಗುತ್ತದೆ ಎಂದು ಅವರು ಎಚ್ಚರಿಸಿದರು.

ಮೈಸೂರು ಯುವ ದಸರಾದಲ್ಲಿ ಪ್ರಭುದೇವ ವಿಶೇಷ ಅತಿಥಿ: ಜಿಲ್ಲಾಡಳಿತದಿಂದ ಗೌರವಪೂರ್ವಕ ಆಹ್ವಾನ

0

ಮೈಸೂರು: ಮೈಸೂರು ದಸರಾ-2026ರ ಸಾಂಸ್ಕೃತಿಕ ಕಾರ್ಯಕ್ರಮ ‘ಯುವ ದಸರಾ’ಗೆ ನಟ ಹಾಗೂ ನೃತ್ಯ ನಿರ್ದೇಶಕ ಪ್ರಭುದೇವ ಅವರನ್ನು ಉದ್ಘಾಟಕರಾಗಿ ಆಹ್ವಾನಿಸಲಾಗಿದೆ. ಈ ಸಂಬಂಧ ಮೈಸೂರು ಜಿಲ್ಲಾಡಳಿತದಿಂದ ಅವರಿಗೆ ಅಧಿಕೃತ ಆಹ್ವಾನ ನೀಡಲಾಗಿದೆ.

ಜಿಲ್ಲಾಡಳಿತದ ಪ್ರತಿನಿಧಿಗಳು ಪ್ರಭುದೇವ ಅವರಿಗೆ ಪೇಟ ತೊಡಿಸಿ, ಶಾಲು ಹಾಗೂ ಹೂವಿನ ಹಾರ ಹಾಕಿ ಗೌರವಿಸಿದರು. ಬಳಿಕ ಯುವ ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ ಅವರನ್ನು ಆತ್ಮೀಯವಾಗಿ ಆಹ್ವಾನಿಸಲಾಯಿತು.

ಅಭಿಮಾನಿಗಳ ಒತ್ತಾಯಕ್ಕೆ ಮಣಿದ ಸರ್ಕಾರ: ದಸರಾಗೆ ನಿಶಾನೆ ಆನೆಯಾಗಿ ಅಭಿಮನ್ಯು ಆಯ್ಕೆ

0

ಮೈಸೂರು: ಮೈಸೂರು ದಸರಾ ಜಂಬೂಸವಾರಿಯಲ್ಲಿ ಸತತ ಆರು ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಗಜಪಡೆ ನಾಯಕ ಅಭಿಮನ್ಯು ಇದೀಗ ಮತ್ತೆ ದಸರಾ ಮೆರವಣಿಗೆಯಲ್ಲಿ ಹೆಜ್ಜೆ ಹಾಕಲಿದ್ದಾನೆ. 60 ವರ್ಷ ತುಂಬಿದ ಹಿನ್ನೆಲೆಯಲ್ಲಿ ಅಭಿಮನ್ಯುವಿಗೆ ನಿವೃತ್ತಿ ನೀಡಲಾಗಿತ್ತು. ಆದರೆ ಅಭಿಮಾನಿಗಳ ಒತ್ತಾಯದ ಮೇರೆಗೆ 2026ರ ದಸರಾ ಜಂಬೂಸವಾರಿಯಲ್ಲಿ ನಿಶಾನೆ ಆನೆಯಾಗಿ ಭಾಗವಹಿಸಲು ಸರ್ಕಾರ ಅವಕಾಶ ನೀಡಿದೆ.

ಅಭಿಮನ್ಯು ಹಲವು ವರ್ಷಗಳಿಂದ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿದ್ದಾನೆ. ಅಂಬಾರಿ ಹೊರುವ ಜವಾಬ್ದಾರಿಯನ್ನು ಶಿಸ್ತು ಹಾಗೂ ಧೈರ್ಯದಿಂದ ನಿರ್ವಹಿಸಿ, ನಾಡಿನ ಜನರ ಅಪಾರ ಪ್ರೀತಿ ಮತ್ತು ಗೌರವ ಗಳಿಸಿದ್ದಾನೆ.

ನಿವೃತ್ತಿ ಹಿನ್ನೆಲೆಯಲ್ಲಿ ಅಭಿಮನ್ಯುವಿಗೆ ಇತ್ತೀಚೆಗೆ ಗೌರವ ಹಾಗೂ ಬೀಳ್ಕೊಡುಗೆ ಸಮಾರಂಭ ಆಯೋಜಿಸಲಾಗಿತ್ತು. ಆದರೆ ಅಭಿಮಾನಿಗಳು ಅಭಿಮನ್ಯುವನ್ನು ದಸರಾ-2026ರ ಜಂಬೂಸವಾರಿಗೆ ಕೊನೆಯ ಬಾರಿಗೆ ಕರೆತಂದು ನಿಶಾನೆ ಆನೆಯಾಗಿ ಗೌರವಪೂರ್ಣ ಬೀಳ್ಕೊಡುಗೆ ನೀಡಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿದ್ದರು.

ಅಭಿಮಾನಿಗಳ ಬೇಡಿಕೆಗೆ ಸ್ಪಂದಿಸಿರುವ ಅರಣ್ಯ ಸಚಿವ ರಾಮಲಿಂಗಾರೆಡ್ಡಿ, 2026ರ ದಸರಾ ಜಂಬೂಸವಾರಿಯಲ್ಲಿ ಅಭಿಮನ್ಯುವನ್ನು ಗಜಪಡೆಯೊಂದಿಗೆ ನಿಶಾನೆ ಆನೆಯಾಗಿ ಭಾಗವಹಿಸುವಂತೆ ಮಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಸೂಚಿಸಿದ್ದಾರೆ.

ಸರ್ಕಾರದ ಈ ನಿರ್ಧಾರದಿಂದ ಅಭಿಮನ್ಯುವನ್ನು ಮತ್ತೊಮ್ಮೆ ದಸರಾ ಮೆರವಣಿಗೆಯಲ್ಲಿ ಕಣ್ತುಂಬಿಕೊಳ್ಳುವ ಅವಕಾಶ ಅಭಿಮಾನಿಗಳಿಗೆ ಸಿಗಲಿದೆ. ಹಲವು ವರ್ಷಗಳ ಅಮೂಲ್ಯ ಸೇವೆಯ ಬಳಿಕ ಅಭಿಮನ್ಯುವಿಗೆ ಅದ್ದೂರಿ ಗೌರವದೊಂದಿಗೆ ಬೀಳ್ಕೊಡುಗೆ ನೀಡಬೇಕೆಂಬ ಅಭಿಮಾನಿಗಳ ಆಸೆಯೂ ಇದೀಗ ಈಡೇರಲಿದೆ.

ಸರ್ಕಾರಿ ಶಾಲೆ ಮೇಲ್ಛಾವಣಿ ಕುಸಿದು 8 ಮಕ್ಕಳಿಗೆ ಗಾಯ ಪ್ರಕರಣ: ಮುಖ್ಯ ಶಿಕ್ಷಕ ಸೇರಿ ಮೂವರು ಅಮಾನತು

0

ಬಾಗಲಕೋಟೆ: ಮುಗಳೊಳ್ಳಿ ತಾಂಡಾದ ಸರ್ಕಾರಿ ಶಾಲೆಯ ಮೇಲ್ಛಾವಣಿ ಕುಸಿದು 8 ಮಕ್ಕಳು ಗಾಯಗೊಂಡ ಪ್ರಕರಣದ ಬೆನ್ನಲ್ಲೇ ಶಿಕ್ಷಣ ಹಾಗೂ ಪಂಚಾಯತ್ ರಾಜ್ ಎಂಜಿನಿಯರಿಂಗ್ ಇಲಾಖೆಯ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕ ಸಿ.ಬಿ. ಹೆಳವರ ಸೇರಿದಂತೆ ಮೂವರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.

ಮೇಲ್ಛಾವಣಿ ದುರಸ್ತಿ ಕಾರ್ಯ ನಡೆಯುತ್ತಿದ್ದರೂ ಇಲಾಖೆಯ ಗಮನಕ್ಕೆ ತರದೆ ಕರ್ತವ್ಯಲೋಪ ಎಸಗಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಪ್ರಭಾರಿ ಮುಖ್ಯ ಶಿಕ್ಷಕ ಸಿ.ಬಿ. ಹೆಳವರ ಅವರನ್ನು ಕರ್ನಾಟಕ ನಾಗರಿಕ ಸೇವಾ ನಿಯಮ 1957ರ ನಿಯಮ 10(1)ರ ಅನ್ವಯ ಅಮಾನತುಗೊಳಿಸಲಾಗಿದೆ. ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್.ಎಸ್. ಸೀತಾರಾಮು ಈ ಆದೇಶ ಹೊರಡಿಸಿದ್ದಾರೆ.

ಶಾಲಾ ಕಟ್ಟಡದ ಫಿಟ್ನೆಸ್‌ಗೆ ಸಂಬಂಧಿಸಿದಂತೆ ಸರಿಯಾದ ಪ್ರಮಾಣಪತ್ರ ನೀಡುವಲ್ಲಿ ವಿಫಲರಾದ ಆರೋಪದ ಹಿನ್ನೆಲೆಯಲ್ಲಿ ಪಿಆರ್‌ಇಡಿ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಎಸ್.ಎಂ. ರೇವಡಿ ಹಾಗೂ ಜ್ಯೂನಿಯರ್ ಎಂಜಿನಿಯರ್ ಎಸ್.ಎಂ. ಸಂಗನಾಳ ಅವರನ್ನೂ ಅಮಾನತುಗೊಳಿಸಲಾಗಿದೆ. ಜಿಲ್ಲಾ ಪಂಚಾಯಿತಿ ಸಿಇಒ ಗಜಾನನ ಬಾಲೆ ಈ ಇಬ್ಬರ ವಿರುದ್ಧ ಅಮಾನತು ಆದೇಶ ಹೊರಡಿಸಿದ್ದಾರೆ.

ಸೆಪ್ಟೆಂಬರ್ 2ರಂದು ತರಗತಿ ನಡೆಯುತ್ತಿದ್ದ ಸಂದರ್ಭದಲ್ಲಿ ಶಾಲಾ ಕೊಠಡಿಯ ಮೇಲ್ಛಾವಣಿಯ ಒಂದು ಭಾಗ ಏಕಾಏಕಿ ಕುಸಿದು ಬಿದ್ದಿತ್ತು. ಶಾಲಾ ಕಟ್ಟಡಗಳ ಸುರಕ್ಷತೆ ಪರಿಶೀಲನೆ ಸಂದರ್ಭದಲ್ಲಿ ಜಿಲ್ಲೆಯ 628 ಶಾಲಾ ಕಟ್ಟಡಗಳನ್ನು ಅನ್‌ಫಿಟ್‌ ಎಂದು ಗುರುತಿಸಿ ವರದಿ ಮಾಡಲಾಗಿತ್ತು. ಆದರೆ ಮುಗಳೊಳ್ಳಿ ತಾಂಡಾದ ಶಾಲೆ ಆ ಪಟ್ಟಿಯಲ್ಲಿ ಇರಲಿಲ್ಲ.

ಈ ಹಿನ್ನೆಲೆಯಲ್ಲಿ ಶಾಲಾ ಕಟ್ಟಡವನ್ನು ಪರಿಶೀಲಿಸಿದ ಎಂಜಿನಿಯರ್‌ಗಳು ಸೂಕ್ತ ರೀತಿಯಲ್ಲಿ ಪರಿಶೀಲನೆ ನಡೆಸಿದ್ದಾರೆಯೇ ಎಂಬ ಪ್ರಶ್ನೆ ಎದುರಾಗಿದೆ. ಮೇಲ್ಛಾವಣಿ ಕುಸಿತದ ಬಳಿಕ ಸಂಬಂಧಪಟ್ಟ ಎಂಜಿನಿಯರ್ ವಿರುದ್ಧ ಕ್ರಮದ ಬಗ್ಗೆ ಜಿಪಂ ಸಿಇಒ ಮಾಹಿತಿ ನೀಡಿದ್ದರು.

ಇದೀಗ ಕಟ್ಟಡದ ಹಾನಿಗೊಳಗಾದ ಭಾಗವನ್ನು ತಕ್ಷಣ ದುರಸ್ತಿ ಮಾಡುವಂತೆ ಪಂಚಾಯತ್ ರಾಜ್ ಎಂಜಿನಿಯರಿಂಗ್ ಇಲಾಖೆಗೆ ಸೂಚನೆ ನೀಡಲಾಗಿದೆ.

ಪಂಚ ಗ್ಯಾರಂಟಿಗಳ ಭ್ರಮೆಯಲ್ಲಿ ತೇಲುತ್ತಿರುವ ಕಾಂಗ್ರೆಸ್ ಸರ್ಕಾರ! ಕಡುಬಡವರ ಬದುಕನ್ನೇ ಮರೆತಿದೆ – ಬಿ.ವೈ. ವಿಜಯೇಂದ್ರ

0

ಸಿಂಧನೂರು: ಡಿಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ನಾಡಿನ ಬಡವರು, ಕೂಲಿ ಕಾರ್ಮಿಕರು, ರೈತರು ಹಾಗೂ ದುರ್ಬಲ ವರ್ಗಗಳಿಂದ ದೂರ ಸಾಗುತ್ತಿದೆ. ರಾಜ್ಯದ ಕಡುಬಡವರು ಸರ್ಕಾರಕ್ಕೆ ಶಾಪ ಹಾಕುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ವಾಗ್ದಾಳಿ ನಡೆಸಿದರು.

ಸಿಂಧನೂರಿನಲ್ಲಿ ಬಿಜೆಪಿ 4 ನೇ ದಿನದ ಪಾದಯಾತ್ರೆಗೆ ಚಾಲನೆ ನೀಡಿದ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಪಂಚ ಗ್ಯಾರಂಟಿಗಳ ಭ್ರಮೆಯಲ್ಲಿ ತೇಲುತ್ತಿರುವ ಕಾಂಗ್ರೆಸ್ ಸರ್ಕಾರ ವಾಸ್ತವಿಕ ಸತ್ಯದಿಂದ ದೂರವಾಗಿದೆ ಎಂದು ಟೀಕಿಸಿದರು.

ವೃದ್ಧಾಪ್ಯ ವೇತನ, ಅಂಗವಿಕಲರ ಮಾಸಾಶನ ಸೇರಿದಂತೆ ಸಾಮಾಜಿಕ ಭದ್ರತಾ ಪಿಂಚಣಿಗಳು ಹಲವು ತಿಂಗಳುಗಳಿಂದ ಫಲಾನುಭವಿಗಳಿಗೆ ತಲುಪುತ್ತಿಲ್ಲ. ಕಳೆದ ಆರು ತಿಂಗಳಿಂದ ಮಾಸಾಶನ ಬಂದಿಲ್ಲ ಎಂದು ಫಲಾನುಭವಿಗಳೇ ಅಳಲು ತೋಡಿಕೊಳ್ಳುತ್ತಿದ್ದಾರೆ. ಕಡುಬಡವರ ಬದುಕಿಗೆ ಆಸರೆಯಾಗಬೇಕಾದ ಸರ್ಕಾರ ಅವರ ಸಂಕಷ್ಟಕ್ಕೆ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದರು.

ಗಂಗಾ ಕಲ್ಯಾಣ ಯೋಜನೆಯ ಪ್ರಯೋಜನವೂ ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ದೊರೆಯುತ್ತಿಲ್ಲ. ಮನೆ ಇಲ್ಲದ ಬಡವರಿಗೆ ಮನೆಗಳನ್ನು ನಿರ್ಮಿಸಿಕೊಡುವಲ್ಲಿಯೂ ಸರ್ಕಾರ ವಿಫಲವಾಗಿದೆ. ಬಡವರ ಕಲ್ಯಾಣಕ್ಕಾಗಿ ನೀಡಬೇಕಾದ ಹಣವನ್ನೇ ಸಮಯಕ್ಕೆ ನೀಡಲು ಸಾಧ್ಯವಾಗದ ಸ್ಥಿತಿಗೆ ಕಾಂಗ್ರೆಸ್ ಸರ್ಕಾರ ತಲುಪಿದೆ ಎಂದು ವಿಜಯೇಂದ್ರ ಹೇಳಿದರು.

ರೈತರು, ಕೂಲಿ ಕಾರ್ಮಿಕರು, ವೃದ್ಧರು, ಅಂಗವಿಕಲರು ಸೇರಿದಂತೆ ಸಮಾಜದ ಎಲ್ಲ ವರ್ಗದ ಜನರನ್ನು ಸರ್ಕಾರ ನಿರ್ಲಕ್ಷ್ಯದಿಂದ ನೋಡುತ್ತಿದೆ. ಒಂದು ಕಡೆ ಗ್ಯಾರಂಟಿಗಳ ಪ್ರಚಾರದಲ್ಲಿ ಸರ್ಕಾರ ಮುಳುಗಿದ್ದರೆ, ಮತ್ತೊಂದೆಡೆ ನಾಡಿನ ಕಡುಬಡವರ ನೈಜ ಸಮಸ್ಯೆಗಳು ಕಡೆಗಣನೆಯಾಗಿವೆ ಎಂದು ದೂರಿದರು.