Home Blog

ಸಚಿವ ಸ್ಥಾನ ಸಿಕ್ಕರೂ ಒಂದೆಡೆ ಮನಸ್ಸಿನಲ್ಲಿ ನೋವಿದೆ: ಯತೀಂದ್ರ ಸಿದ್ದರಾಮಯ್ಯ!

ಬೆಂಗಳೂರು: ಒಂದೆಡೆ ಮಂತ್ರಿ ಆಗಿರೋದು ಖುಷಿ ತಂದಿದೆ. ಇನ್ನೊಂದೆಡೆ ತಂದೆ ಅವಧಿ ಪೂರೈಸಿದ್ದಕ್ಕೆ ದುಃಖವಿದೆ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಒಂದು ಕಡೆ ನನಗೆ ಸಚಿವನಾಗಿ ಜವಾಬ್ದಾರಿ ಸಿಕ್ಕಿರುವುದು ಸಂತೋಷ ತಂದಿದೆ. ಆದರೆ ಇನ್ನೊಂದೆಡೆ ಅಷ್ಟೇ ದುಃಖವೂ ಇದೆ” ಎಂದು ಹೇಳಿದರು.

ನನ್ನ ತಂದೆ ಸಿದ್ದರಾಮಯ್ಯ ಅವರು ಪೂರ್ಣ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಅಧಿಕಾರಾವಧಿ ಪೂರೈಸುತ್ತಾರೆ ಎಂದು ನಾನು ನಿರೀಕ್ಷಿಸಿದ್ದೆ. ಆದರೆ ಅದು ಸಾಧ್ಯವಾಗದೇ ಇರುವುದು ವೈಯಕ್ತಿಕವಾಗಿ ತೀವ್ರ ದುಃಖ ತಂದಿದೆ. ಅವರ ಸ್ಥಾನಕ್ಕೆ ನನಗೆ ಸಚಿವ ಸ್ಥಾನ ನೀಡಲಾಗಿದೆ ಎಂದರು.

ಇಂದು ನಡೆದ ಮೊದಲ ಸಚಿವ ಸಂಪುಟ ಸಭೆ ಯಶಸ್ವಿಯಾಗಿ ನಡೆದಿದೆ. ಆದರೆ ಸಂಪುಟದಲ್ಲಿ ಕೈಗೊಂಡ ನಿರ್ಣಯಗಳನ್ನು ಸಭೆಯಿಂದ ಹೊರಗಡೆ ಅಧಿಕೃತವಾಗಿ ಹೇಳಲು ನಿಯಮಗಳ ಕಾರಣದಿಂದ ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು. ಈ ಕುರಿತು ಸಿಎಂ ಹಾಗೂ ಡಿಸಿಎಂ ಅವರೇ ವಿವರ ನೀಡಲಿದ್ದಾರೆ ಎಂದು ಹೇಳಿದರು.

ತಮಗೆ ನೀಡಲಾಗುವ ಖಾತೆಯ ಕುರಿತು ಪ್ರತಿಕ್ರಿಯಿಸಿದ ಯತೀಂದ್ರ, ಪಕ್ಷದ ವರಿಷ್ಠರು ಯಾವ ಖಾತೆ ನೀಡಿದರೂ ಅದನ್ನು ಜವಾಬ್ದಾರಿಯಿಂದ ನಿರ್ವಹಿಸುವೆ. ಯಾರಿಗೆ ಯಾವ ಖಾತೆ ನೀಡಬೇಕು ಎಂಬುದು ಸಂಪೂರ್ಣವಾಗಿ ಪಕ್ಷದ ಹಿರಿಯ ನಾಯಕರ ನಿರ್ಧಾರಕ್ಕೆ ಬಿಟ್ಟ ವಿಚಾರ ಎಂದು ಹೇಳಿದರು.

“ಅಸಾಧ್ಯವಾದುದು ಏನೂ ಇಲ್ಲ”: ರಾಜ್ಯದ ಜನತೆಗೆ ಮಹತ್ವದ ಕರೆ ಕೊಟ್ಟ CM ಡಿ.ಕೆ. ಶಿವಕುಮಾರ್!

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ ನಂತರ ಭಾವನಾತ್ಮಕವಾಗಿ ಸಾಮಾಜಿಕ ಜಾಲತಾಣದಲ್ಲಿ ಸಂದೇಶ ಹಂಚಿಕೊಂಡಿದ್ದಾರೆ.

ನನ್ನ ಬದುಕಿನ ಪ್ರತಿಯೊಂದು ಏಳುಬೀಳುಗಳಲ್ಲಿಯೂ ಧೈರ್ಯ ತುಂಬಿ ಬೆನ್ನಿಗೆ ನಿಂತಿರುವ ಕೋಟ್ಯಂತರ ಜನತೆ ಹಾಗೂ ಕಾರ್ಯಕರ್ತರ ಆಶೀರ್ವಾದದಿಂದ ನಾನು ಇಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದೇನೆ. ಈ ಕ್ಷಣದಲ್ಲಿ ನನ್ನ ಮೇಲೆ ತೋರಿದ ಅಪಾರ ಪ್ರೀತಿ ಮತ್ತು ವಿಶ್ವಾಸಕ್ಕೆ ತಲೆಬಾಗುತ್ತೇನೆ ಎಂದು ಸಿಎಂ ಡಿಕೆಶಿ ಭಾವುಕರಾಗಿ ಹೇಳಿದ್ದಾರೆ.

ಮುಖ್ಯಮಂತ್ರಿಯ ಜವಾಬ್ದಾರಿ ನನ್ನ ಹೆಗಲ ಮೇಲೆ ಬಂದಿರುವುದು ಕೇವಲ ಅಧಿಕಾರವಲ್ಲ, ಅದು ಕನ್ನಡಿಗರ ಕನಸುಗಳನ್ನು ಸಾಕಾರಗೊಳಿಸುವ ಪವಿತ್ರ ಕರ್ತವ್ಯವಾಗಿದೆ. ಈ ಅವಕಾಶ ನೀಡಿದ ಹಿರಿಯ ನಾಯಕರು, ಮಾರ್ಗದರ್ಶಕರು ಹಾಗೂ ಸದಾ ಬೆನ್ನಿಗೆ ನಿಂತಿರುವ ಪ್ರತಿಯೊಬ್ಬರಿಗೂ ಅವರು ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸಿದ್ದಾರೆ.

ಇಂದಿನ ವೇಗವಾಗಿ ಬದಲಾಗುತ್ತಿರುವ ತಂತ್ರಜ್ಞಾನ ಯುಗದಲ್ಲಿ ಹೊಸ ಚಿಂತನೆಗಳು ಮತ್ತು ನವೀನ ಆಲೋಚನೆಗಳೊಂದಿಗೆ ಕರ್ನಾಟಕವನ್ನು ಅಭಿವೃದ್ಧಿಯ ಅತ್ಯುನ್ನತ ಶಿಖರಕ್ಕೆ ಕೊಂಡೊಯ್ಯಬೇಕಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಈ ಸಮಗ್ರ ಅಭಿವೃದ್ಧಿಯ ದಾರಿಯಲ್ಲಿ ರೈತರು, ಶ್ರಮಿಕರು, ಮಹಿಳೆಯರು, ವಿದ್ಯಾರ್ಥಿಗಳು, ಯುವಜನರು ಹಾಗೂ ಪ್ರತಿಯೊಬ್ಬ ನಾಗರಿಕರ ಸಹಭಾಗಿತ್ವ ಅತ್ಯಂತ ಮುಖ್ಯವಾಗಿದೆ ಎಂದು ಹೇಳಿದ್ದಾರೆ.

ಯಾವುದೇ ಒಬ್ಬ ವ್ಯಕ್ತಿಯಿಂದ ಬದಲಾವಣೆ ಸಾಧ್ಯವಿಲ್ಲ, ಆದರೆ ನಾವು ಎಲ್ಲರೂ ಒಟ್ಟಾಗಿ ಕೈಜೋಡಿಸಿದರೆ ಅಸಾಧ್ಯವಾದುದು ಯಾವುದೂ ಇಲ್ಲ. ಭವಿಷ್ಯದ ಪೀಳಿಗೆ ಹೆಮ್ಮೆಪಡುವಂತಹ ಸುಂದರ, ಸಮೃದ್ಧ ಮತ್ತು ಪ್ರಗತಿಪರ ಕರ್ನಾಟಕವನ್ನು ನಿರ್ಮಿಸುವುದೇ ನಮ್ಮ ಗುರಿ ಎಂದು ಅವರು ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.

ಸಿಎಂ ಡಿಕೆ ಶಿವಕುಮಾರ್‌, ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಆಶೀರ್ವದಿಸಿದ ಹುಕ್ಕೇರಿ ಶ್ರೀ

ಬೆಳಗಾವಿ: ಲೋಕಭವನದಲ್ಲಿ ನಡೆದ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ರಂಭಾಪುರಿ ಪೀಠದ ಶ್ರೀ ವೀರಗಂಗಾಧರ ಜಗದ್ಗುರುಗಳ ಭಾವಚಿತ್ರಕ್ಕೆ ನಮಸ್ಕರಿಸಿ, ಎಲ್ಲಾ ಧರ್ಮಗಳ ಗುರುಗಳ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕರಿಸಿರುವುದು ಸಂತಸದ ಸಂಗತಿ ಎಂದು ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆಯ ರಾಷ್ಟ್ರೀಯ ಉಪಾಧ್ಯಕ್ಷ ಹಾಗೂ ಬೆಳಗಾವಿ ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಅಭಿಪ್ರಾಯಪಟ್ಟರು.

ಶ್ರೀ ಮಠದಿಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಗೌರವ ಶ್ರೀರಕ್ಷೆ ನೀಡಿ ಆಶೀರ್ವಾದ ಮಾಡಿದ ಶ್ರೀಗಳು, ಇದು ಕರ್ನಾಟಕದ ಇತಿಹಾಸದಲ್ಲಿ ವಿಶಿಷ್ಟ ಕ್ಷಣವಾಗಿದೆ ಎಂದು ಹೇಳಿದರು. ಇದೇ ಮೊದಲ ಬಾರಿಗೆ ಮುಖ್ಯಮಂತ್ರಿಯ ಪ್ರಮಾಣ ವಚನ ಸಮಾರಂಭದಲ್ಲಿ ಎಲ್ಲ ಧರ್ಮದ ಗುರುಗಳ ಸಮ್ಮುಖದಲ್ಲಿ ಪ್ರಮಾಣ ವಚನ ನಡೆದಿರುವುದು ಹೆಮ್ಮೆಯ ವಿಷಯ ಎಂದು ತಿಳಿಸಿದರು. ರಾಜ್ಯದ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಲಿ ಎಂದು ಆಶಿಸಿದರು.

ಇದೇ ಸಂದರ್ಭದಲ್ಲಿ ಬೆಳಗಾವಿ ಜಿಲ್ಲೆಯ ಸತೀಶ್ ಜಾರಕಿಹೊಳಿ ಅವರು ಸಚಿವ ಸಂಪುಟ ದರ್ಜೆಯ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿರುವುದಕ್ಕೆ ಸಂತೋಷ ವ್ಯಕ್ತಪಡಿಸಿದ ಶ್ರೀಗಳು, ಬಹುದೊಡ್ಡ ಜಿಲ್ಲೆಯಾದ ಬೆಳಗಾವಿಗೆ ಇನ್ನಷ್ಟು ಸಚಿವ ಸ್ಥಾನಗಳು ದೊರೆಯಲಿ ಎಂದು ಶುಭ ಹಾರೈಸಿದರು.

ಮಕ್ಕಳ ಎತ್ತರ ಹೆಚ್ಚಾಗುತ್ತಿಲ್ಲವೇ? ಕಾರಣವಾಗಿರಬಹುದು ಈ ಪೋಷಕಾಂಶಗಳ ಕೊರತೆ!

ಇತ್ತೀಚಿನ ದಿನಗಳಲ್ಲಿ ಅನೇಕ ಪೋಷಕರು ತಮ್ಮ ಮಕ್ಕಳ ಎತ್ತರ ಮತ್ತು ದೈಹಿಕ ಬೆಳವಣಿಗೆ ನಿರೀಕ್ಷಿತ ಮಟ್ಟದಲ್ಲಿ ಆಗುತ್ತಿಲ್ಲ ಎಂಬ ಆತಂಕ ವ್ಯಕ್ತಪಡಿಸುತ್ತಿದ್ದಾರೆ.

ಆರೋಗ್ಯ ತಜ್ಞರ ಪ್ರಕಾರ, ಮಕ್ಕಳ ಬೆಳವಣಿಗೆಯಲ್ಲಿ ಜನ್ಯಗುಣಗಳ ಜೊತೆಗೆ ಸಮತೋಲನಯುತ ಆಹಾರ ಮತ್ತು ಅಗತ್ಯ ಪೋಷಕಾಂಶಗಳೂ ಮಹತ್ವದ ಪಾತ್ರ ವಹಿಸುತ್ತವೆ.

ಬಾಲ್ಯ ಮತ್ತು ಕೌಮಾರ್ಯವು ದೇಹದ ಬೆಳವಣಿಗೆಯ ಪ್ರಮುಖ ಹಂತಗಳಾಗಿದ್ದು, ಈ ಅವಧಿಯಲ್ಲಿ ದೇಹಕ್ಕೆ ಅಗತ್ಯ ಪ್ರಮಾಣದಲ್ಲಿ ಪ್ರೋಟೀನ್, ವಿಟಮಿನ್ ಹಾಗೂ ಖನಿಜಾಂಶಗಳು ದೊರೆಯಬೇಕು. ಪೌಷ್ಟಿಕಾಂಶಗಳ ಕೊರತೆಯಿಂದ ಎಲುಬು, ಸ್ನಾಯು ಮತ್ತು ದೇಹದ ಸಾಮಾನ್ಯ ಬೆಳವಣಿಗೆ ಮೇಲೆ ಪರಿಣಾಮ ಬೀಳುವ ಸಾಧ್ಯತೆ ಇದೆ ಎಂದು ತಜ್ಞರು ತಿಳಿಸಿದ್ದಾರೆ.

ಮಕ್ಕಳ ಎತ್ತರ ಮತ್ತು ದೈಹಿಕ ಬೆಳವಣಿಗೆಗೆ ಪ್ರೋಟೀನ್, ಕ್ಯಾಲ್ಸಿಯಂ, ವಿಟಮಿನ್-ಡಿ, ಐರನ್, ಜಿಂಕ್ ಹಾಗೂ ಮ್ಯಾಗ್ನೀಷಿಯಂ ಪ್ರಮುಖ ಪೋಷಕಾಂಶಗಳಾಗಿವೆ. ಹಾಲು, ಮೊಟ್ಟೆ, ಬೇಳೆ, ಕಾಳುಗಳು, ಹಸಿರು ಸೊಪ್ಪುಗಳು ಮತ್ತು ಪೌಷ್ಟಿಕ ಆಹಾರಗಳಲ್ಲಿ ಇವು ಸಮೃದ್ಧವಾಗಿವೆ.

ಇದರ ಜೊತೆಗೆ ಪ್ರತಿದಿನ ಸಾಕಷ್ಟು ನಿದ್ರೆ, ನಿಯಮಿತ ವ್ಯಾಯಾಮ, ಹೊರಾಂಗಣ ಆಟಗಳು, ಸಮತೋಲನಯುತ ಆಹಾರ ಹಾಗೂ ಸಾಕಷ್ಟು ನೀರು ಸೇವನೆ ಮಕ್ಕಳ ಆರೋಗ್ಯಕರ ಬೆಳವಣಿಗೆಗೆ ಸಹಕಾರಿ ಎಂದು ವೈದ್ಯರು ಸಲಹೆ ನೀಡಿದ್ದಾರೆ.

ಅದೇ ವೇಳೆ ಜಂಕ್ ಫುಡ್, ಸಿಹಿ ಪಾನೀಯಗಳ ಅತಿಯಾದ ಸೇವನೆ, ಮೊಬೈಲ್ ಮತ್ತು ಟಿವಿ ಮುಂದೆ ಹೆಚ್ಚು ಸಮಯ ಕಳೆಯುವುದು, ದೈಹಿಕ ಚಟುವಟಿಕೆಗಳ ಕೊರತೆ ಹಾಗೂ ತಡರಾತ್ರಿ ಜಾಗರಣೆ ಮಕ್ಕಳ ಬೆಳವಣಿಗೆಗೆ ಅಡ್ಡಿಯಾಗಬಹುದು ಎಂದು ಎಚ್ಚರಿಕೆ ನೀಡಲಾಗಿದೆ.

ಮಕ್ಕಳ ಎತ್ತರ ಅಥವಾ ಬೆಳವಣಿಗೆ ಕುರಿತು ಪೋಷಕರಿಗೆ ಯಾವುದೇ ಅನುಮಾನಗಳಿದ್ದರೆ ವೈದ್ಯರನ್ನು ಸಂಪರ್ಕಿಸಿ ಸೂಕ್ತ ಸಲಹೆ ಪಡೆಯುವುದು ಉತ್ತಮ ಎಂದು ಆರೋಗ್ಯ ತಜ್ಞರು ತಿಳಿಸಿದ್ದಾರೆ.

ಡಿಕೆಶಿ ಸಿಎಂ ಆಗಿ ಪ್ರಮಾಣವಚನ ಸ್ವೀಕಾರ: 13 ಸಚಿವರು ಸಂಪುಟಕ್ಕೆ ಎಂಟ್ರಿ

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಇಂದು ಪ್ರಮಾಣವಚನ ಸ್ವೀಕರಿಸಿದ್ದು, ರಾಜ್ಯದಲ್ಲಿ ಹೊಸ ಸರ್ಕಾರ ಅಧಿಕೃತವಾಗಿ ಅಧಿಕಾರ ವಹಿಸಿಕೊಂಡಿದೆ. ಮುಖ್ಯಮಂತ್ರಿ ಜೊತೆಗೆ 13 ಮಂದಿ ಸಚಿವರು ಸಹ ಪ್ರಮಾಣವಚನ ಸ್ವೀಕರಿಸುವ ಮೂಲಕ ಡಿಕೆಶಿ ಸಚಿವ ಸಂಪುಟದ ಮೊದಲ ಹಂತದ ರಚನೆ ಪೂರ್ಣಗೊಂಡಿದೆ.

ಬೆಂಗಳೂರಿನ ಲೋಕಭವನದ ಗಾಜಿನ ಮನೆಯಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ನೂತನ ಮುಖ್ಯಮಂತ್ರಿ ಹಾಗೂ ಸಚಿವರಿಗೆ ಪ್ರಮಾಣವಚನ ಬೋಧಿಸಿದರು. ಹಿರಿಯ ಕಾಂಗ್ರೆಸ್ ನಾಯಕ ಡಾ. ಜಿ. ಪರಮೇಶ್ವರ್ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.

ಸಂಪುಟ ದರ್ಜೆ ಸಚಿವರಾಗಿ ಕೆ.ಹೆಚ್. ಮುನಿಯಪ್ಪ, ಕೆ.ಜೆ. ಜಾರ್ಜ್, ಎಂ.ಬಿ. ಪಾಟೀಲ್, ರಾಮಲಿಂಗಾ ರೆಡ್ಡಿ, ಸತೀಶ್ ಜಾರಕಿಹೊಳಿ, ಕೃಷ್ಣ ಭೈರೇಗೌಡ, ಪ್ರಿಯಾಂಕ್ ಖರ್ಗೆ, ಯು.ಟಿ. ಖಾದರ್, ಈಶ್ವರ್ ಖಂಡ್ರೆ, ಡಾ. ಯತೀಂದ್ರ ಸಿದ್ದರಾಮಯ್ಯ, ಬೈರತಿ ಸುರೇಶ್ ಹಾಗೂ ಶರಣ ಪ್ರಕಾಶ್ ಪಾಟೀಲ್ ಪ್ರಮಾಣವಚನ ಸ್ವೀಕರಿಸಿದರು.

ಪ್ರಮಾಣವಚನ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕರು, ಶಾಸಕರು, ವಿವಿಧ ಕ್ಷೇತ್ರಗಳ ಗಣ್ಯರು ಹಾಗೂ ಸಾವಿರಾರು ಕಾರ್ಯಕರ್ತರು ಭಾಗವಹಿಸಿದ್ದರು. ಹೊಸ ಸರ್ಕಾರ ಅಧಿಕಾರ ಸ್ವೀಕರಿಸುತ್ತಿದ್ದಂತೆ ರಾಜ್ಯ ರಾಜಕೀಯದಲ್ಲಿ ಹೊಸ ಅಧ್ಯಾಯ ಆರಂಭವಾಗಿದೆ.

ಸಂಪುಟದ ಸದಸ್ಯರಿಗೆ ಖಾತೆ ಹಂಚಿಕೆ ಕುರಿತು ಶೀಘ್ರದಲ್ಲೇ ಅಧಿಕೃತ ಆದೇಶ ಹೊರಬೀಳುವ ಸಾಧ್ಯತೆ ಇದ್ದು, ಮೊದಲ ಸಚಿವ ಸಂಪುಟ ಸಭೆಯತ್ತ ಈಗ ಎಲ್ಲರ ಗಮನ ನೆಟ್ಟಿದೆ.

ಕೇಕ್ ಕಟ್ ಮಾಡಿ ಸಂಭ್ರಮಿಸಿದ ಕೆಲ ಗಂಟೆಗಳಲ್ಲಿ ಕೊಲೆ: ಪತ್ನಿಯನ್ನು ಹತ್ಯೆ ಮಾಡಿದ ಪತಿ ಅರೆಸ್ಟ್

0

ಬಳ್ಳಾರಿ: ಹುಟ್ಟುಹಬ್ಬ ಆಚರಣೆಯ ಹೆಸರಿನಲ್ಲಿ ಪತ್ನಿಯನ್ನು ಮನೆಯಿಂದ ಕರೆದುಕೊಂಡು ಹೋಗಿ ಕೊಲೆ ಮಾಡಿದ ಅಮಾನವೀಯ ಘಟನೆ ಬಳ್ಳಾರಿಯಲ್ಲಿ ಬೆಳಕಿಗೆ ಬಂದಿದೆ. ಕೊಲೆ ನಡೆದ ಬಳಿಕ 13 ದಿನಗಳ ಕಾಲ ನಾಪತ್ತೆ ನಾಟಕವಾಡಿದ ಪತಿಯೇ ಅಂತಿಮವಾಗಿ ಪೊಲೀಸರ ವಿಚಾರಣೆ ವೇಳೆ ಅಪರಾಧ ಒಪ್ಪಿಕೊಂಡಿದ್ದಾನೆ.

ಮೃತ ಮಹಿಳೆ ಆಫ್ರೀನ್ ಬಾನು ಹಾಗೂ ಆರೋಪಿ ನೂರ್ ಅಹ್ಮದ್ ಪ್ರೀತಿಸಿ ವಿವಾಹವಾಗಿದ್ದರು. ದಾಂಪತ್ಯ ಜೀವನಕ್ಕೆ ಎರಡು ವರ್ಷವಾಗಿದ್ದು, ಎಂಟು ತಿಂಗಳ ಮಗು ಸಹ ಇದೆ. ಆದರೆ ಕಳೆದ ಕೆಲವು ತಿಂಗಳುಗಳಿಂದ ದಂಪತಿ ನಡುವೆ ವೈಮನಸ್ಸು ಹೆಚ್ಚಾಗಿತ್ತು. ಇದೇ ಕಾರಣಕ್ಕೆ ಆಫ್ರೀನ್ ತವರು ಮನೆಯಲ್ಲಿ ವಾಸವಾಗಿದ್ದರು.

ಪತ್ನಿಯ ಹುಟ್ಟುಹಬ್ಬದ ದಿನ ಮನೆಗೆ ಬಂದ ನೂರ್ ಅಹ್ಮದ್, ಕುಟುಂಬದವರ ಸಮ್ಮುಖದಲ್ಲೇ ಕೇಕ್ ಕಟ್ ಮಾಡಿ ಸಂಭ್ರಮಿಸಿದ್ದ. ಬಳಿಕ ಪಾರ್ಟಿ ನೆಪದಲ್ಲಿ ಪತ್ನಿಯನ್ನು ಹೊರಗೆ ಕರೆದುಕೊಂಡು ಹೋಗಿದ್ದಾನೆ.

ತನಿಖೆ ಪ್ರಕಾರ, ಪೂರ್ವಯೋಜಿತವಾಗಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದ ಆರೋಪಿ, ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದಾನೆ. ನಂತರ ಮೃತದೇಹವನ್ನು ಬೈಕ್‌ನಲ್ಲಿ ಸಾಗಿಸಿ ಕುಡತಿನಿ ಸಮೀಪದ ಪ್ರದೇಶದಲ್ಲಿ ಎಸೆದು ಪರಾರಿಯಾಗಿದ್ದಾನೆ.

ರಾತ್ರಿ ಮನೆಗೆ ಹಿಂದಿರುಗಿದ ಆರೋಪಿ, ಪತ್ನಿ ಕಾಣೆಯಾಗಿದ್ದಾಳೆ ಎಂದು ಹೇಳಿ ಕುಟುಂಬಸ್ಥರ ಜೊತೆ ಹುಡುಕಾಟ ನಡೆಸುವ ನಾಟಕ ಮಾಡಿದ್ದಾನೆ. ಆದರೆ ಕುಟುಂಬದವರ ಅನುಮಾನ ಹೆಚ್ಚಾದ ಹಿನ್ನೆಲೆಯಲ್ಲಿ ಪೊಲೀಸರಿಗೆ ದೂರು ನೀಡಲಾಗಿತ್ತು.

ಪೊಲೀಸರು ತಾಂತ್ರಿಕ ಮಾಹಿತಿ ಹಾಗೂ ವಿಚಾರಣೆಯ ಆಧಾರದ ಮೇಲೆ ನೂರ್ ಅಹ್ಮದ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಕೊಲೆ ಸತ್ಯ ಹೊರಬಿದ್ದಿದೆ. ಆರೋಪಿಯ ಮಾಹಿತಿ ಮೇರೆಗೆ 13 ದಿನಗಳ ಬಳಿಕ ಮೃತದೇಹ ಪತ್ತೆಯಾಗಿದ್ದು, ಶವ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿತ್ತು.

ಪ್ರಕರಣ ದಾಖಲಿಸಿಕೊಂಡಿರುವ ಕೌಲ್ ಬಜಾರ್ ಪೊಲೀಸರು ಆರೋಪಿ ವಿರುದ್ಧ ಕೊಲೆ ಆರೋಪದಡಿ ಕಾನೂನು ಕ್ರಮ ಜರುಗಿಸಿ ಜೈಲಿಗೆ ಕಳುಹಿಸಿದ್ದಾರೆ.

ಹೊಸ ಸಿಎಂ ಸ್ವಾಗತಕ್ಕೆ ಸಜ್ಜಾದ ವಿಧಾನಸೌಧ: ಹೂವಿನ ಅಲಂಕಾರದಲ್ಲಿ ಮಿನುಗಿದ ಆಡಳಿತ ಕೇಂದ್ರ

ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಚಿವರ ಪ್ರಮಾಣವಚನ ಸಮಾರಂಭದ ಬಳಿಕ ರಾಜ್ಯದ ಆಡಳಿತ ಕೇಂದ್ರ ವಿಧಾನಸೌಧದಲ್ಲಿ ಸಂಭ್ರಮದ ವಾತಾವರಣ ನಿರ್ಮಾಣವಾಗಿದೆ. ಹೊಸ ಸರ್ಕಾರದ ಸ್ವಾಗತಕ್ಕಾಗಿ ವಿಧಾನಸೌಧವನ್ನು ವಿಶೇಷವಾಗಿ ಸಜ್ಜುಗೊಳಿಸಲಾಗಿದ್ದು, ಎಲ್ಲೆಡೆ ಹಬ್ಬದ ಕಳೆ ಕಂಡುಬಂದಿದೆ.

ವಿಧಾನಸೌಧದ ಪ್ರಮುಖ ಪ್ರವೇಶ ದ್ವಾರಗಳನ್ನು ಬಣ್ಣ ಬಣ್ಣದ ಹೂವುಗಳಿಂದ ಅಲಂಕರಿಸಲಾಗಿದೆ. ವಿವಿಧ ಜಾತಿಯ ಆಕರ್ಷಕ ಹೂಗಳನ್ನು ಬಳಸಿ ತೋರಣಗಳು ಮತ್ತು ವಿಶೇಷ ವಿನ್ಯಾಸದ ಅಲಂಕಾರಗಳನ್ನು ಮಾಡಲಾಗಿದ್ದು, ಹೊಸ ಸರ್ಕಾರಕ್ಕೆ ಅದ್ಧೂರಿ ಸ್ವಾಗತ ನೀಡಲು ಸಿದ್ಧತೆ ನಡೆಸಲಾಗಿದೆ.

ಮುಖ್ಯಮಂತ್ರಿ ಹಾಗೂ ಸಚಿವರ ಮೊದಲ ಸಭೆ ನಡೆಯಲಿರುವ ಕ್ಯಾಬಿನೆಟ್ ಸಭಾಂಗಣಕ್ಕೂ ವಿಶೇಷ ಮೆರುಗು ನೀಡಲಾಗಿದೆ. ಸುಗಂಧಭರಿತ ಹೂಗಳಿಂದ ಸಭಾಂಗಣವನ್ನು ಅಲಂಕರಿಸಲಾಗಿದ್ದು, ಅಧಿಕಾರಿಗಳು ಹಾಗೂ ಸಿಬ್ಬಂದಿ ಅಂತಿಮ ಹಂತದ ಸಿದ್ಧತೆಗಳಲ್ಲಿ ತೊಡಗಿದ್ದಾರೆ.

ಪ್ರಮಾಣವಚನ ಸ್ವೀಕಾರದ ಬಳಿಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇರವಾಗಿ ವಿಧಾನಸೌಧಕ್ಕೆ ಆಗಮಿಸಲಿದ್ದು, ನೂತನ ಸಚಿವರೊಂದಿಗೆ ಮೊದಲ ಸಚಿವ ಸಂಪುಟ ಸಭೆ ನಡೆಸಲಿದ್ದಾರೆ. ಈ ಸಭೆಯಲ್ಲಿ ಸರ್ಕಾರದ ಆರಂಭಿಕ ಆಡಳಿತಾತ್ಮಕ ನಿರ್ಧಾರಗಳ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ.

ಹೊಸ ಸರ್ಕಾರ ಅಧಿಕಾರಕ್ಕೆ ಬಂದಿರುವ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ಉತ್ಸಾಹದ ವಾತಾವರಣ ಕಂಡುಬಂದಿದ್ದು, ಆಡಳಿತ ಯಂತ್ರವೂ ಹೊಸ ಜವಾಬ್ದಾರಿಗಳಿಗೆ ಸಜ್ಜಾಗಿದೆ.

ಸಿದ್ದರಾಮಯ್ಯ ಪುತ್ರ ಯತೀಂದ್ರಗೆ ಸಚಿವ ಸ್ಥಾನ: ಡಿಕೆಶಿ ಸಂಪುಟಕ್ಕೆ ಅಧಿಕೃತ ಎಂಟ್ರಿ

ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಅವರಿಗೆ ಸಚಿವ ಸ್ಥಾನ ದೊರೆತಿದೆ. ನಿರೀಕ್ಷೆಯಂತೆ ಅವರು ಇಂದು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.

ಬೆಂಗಳೂರಿನ ಲೋಕಭವನದ ಗ್ಲಾಸ್‌ಹೌಸ್‌ನಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಸಚಿವರಾಗಿ ಶ್ರದ್ಧಾಪೂರ್ವಕವಾಗಿ ಪ್ರತಿಜ್ಞೆ ಸ್ವೀಕರಿಸಿದರು. ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ನೂತನ ಸಚಿವರಿಗೆ ಪ್ರಮಾಣ ಬೋಧಿಸಿದರು.

ಡಿಕೆ ಶಿವಕುಮಾರ್ ನೇತೃತ್ವದ ಮೊದಲ ಸಚಿವ ಸಂಪುಟದಲ್ಲಿ ಯತೀಂದ್ರ ಅವರಿಗೆ ಸ್ಥಾನ ನೀಡಿರುವುದು ಕಾಂಗ್ರೆಸ್ ವಲಯದಲ್ಲಿ ಮಹತ್ವದ ಬೆಳವಣಿಗೆಯಾಗಿ ಪರಿಗಣಿಸಲಾಗಿದೆ. ಸಮಾರಂಭದಲ್ಲಿ ಕಾಂಗ್ರೆಸ್‌ನ ಹಿರಿಯ ನಾಯಕರು, ಶಾಸಕರು ಹಾಗೂ ಗಣ್ಯರು ಉಪಸ್ಥಿತರಿದ್ದರು.

ಪ್ರಮಾಣವಚನ ಸ್ವೀಕಾರದ ಬಳಿಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನೂತನ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರಿಗೆ ಹೂಗುಚ್ಛ ನೀಡಿ ಶುಭ ಹಾರೈಸಿದರು.

ಸಚಿವ ಸ್ಥಾನ ದೊರೆತಿರುವ ಹಿನ್ನೆಲೆಯಲ್ಲಿ ಯತೀಂದ್ರ ಬೆಂಬಲಿಗರಲ್ಲಿ ಸಂಭ್ರಮ ಮನೆ ಮಾಡಿದ್ದು, ರಾಜ್ಯ ರಾಜಕೀಯದಲ್ಲಿ ಇದು ಹೊಸ ಅಧ್ಯಾಯಕ್ಕೆ ನಾಂದಿ ಹಾಡಿದೆ.

ಡಿಕೆಶಿ ಪದಗ್ರಹಣ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾಯ್ತು ಸಿಎಂ ಕಚೇರಿಯ ನಾಮಫಲಕ

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ವಿಧಾನಸೌಧದಲ್ಲಿರುವ ಮುಖ್ಯಮಂತ್ರಿಗಳ ಕಚೇರಿಯಲ್ಲಿ ಆಡಳಿತಾತ್ಮಕ ಬದಲಾವಣೆಗಳು ಆರಂಭಗೊಂಡಿವೆ. ಅದರ ಭಾಗವಾಗಿ ಮುಖ್ಯಮಂತ್ರಿಗಳ ಕಚೇರಿಯ ನಾಮಫಲಕವನ್ನು ಬದಲಾಯಿಸಲಾಗಿದೆ.

ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರ ಹೆಸರಿನ ನಾಮಫಲಕವನ್ನು ತೆರವುಗೊಳಿಸಿ, ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೆಸರಿನ ನಾಮಫಲಕವನ್ನು ಅಳವಡಿಸಲಾಗಿದೆ. ಪ್ರಮಾಣವಚನ ಸ್ವೀಕಾರದ ಬಳಿಕವೇ ಈ ಪ್ರಕ್ರಿಯೆ ಪೂರ್ಣಗೊಂಡಿದ್ದು, ಮುಖ್ಯಮಂತ್ರಿ ಕಚೇರಿ ಹೊಸ ಆಡಳಿತಕ್ಕೆ ಸಜ್ಜಾಗಿದೆ.

ವಿಧಾನಸೌಧದ ಮುಖ್ಯಮಂತ್ರಿಗಳ ಕಚೇರಿಯ ಮುಂಭಾಗದಲ್ಲಿ ಡಿ.ಕೆ. ಶಿವಕುಮಾರ್ ಅವರ ಹೆಸರಿನ ಫಲಕ ಅಳವಡಿಕೆಯಾಗಿರುವುದು ಹೊಸ ಸರ್ಕಾರದ ಅಧಿಕೃತ ಆರಂಭದ ಸಂಕೇತವಾಗಿದೆ.

ನೂತನ ಮುಖ್ಯಮಂತ್ರಿಯಾಗಿ ಅಧಿಕಾರದ ಚುಕ್ಕಾಣಿ ಹಿಡಿದಿರುವ ಡಿಕೆ ಶಿವಕುಮಾರ್ ಅವರು ಆಡಳಿತಾತ್ಮಕ ಚಟುವಟಿಕೆಗಳಿಗೆ ಚಾಲನೆ ನೀಡಿದ್ದು, ಮುಂದಿನ ದಿನಗಳಲ್ಲಿ ಸರ್ಕಾರದ ವಿವಿಧ ಮಹತ್ವದ ನಿರ್ಧಾರಗಳು ಇದೇ ಕಚೇರಿಯಿಂದ ಹೊರಬೀಳಲಿವೆ.

‘ನೋಟಿಸ್‌ಗೆ ಹೆದರಿಲ್ಲ’: ರಣವೀರ್ ಮೇಲಿನ ನಿಷೇಧ ಹಿಂಪಡೆದರೂ FWICE ತಿರುಗೇಟು!

ಮುಂಬೈ: ರಣವೀರ್ ಸಿಂಗ್ ವಿರುದ್ಧ ಘೋಷಿಸಿದ್ದ ಅಸಹಕಾರ ಆದೇಶವನ್ನು ಹಿಂಪಡೆದಿರುವ ಫೆಡರೇಶನ್ ಆಫ್ ವೆಸ್ಟರ್ನ್ ಇಂಡಿಯಾ ಸಿನಿ ಎಂಪ್ಲಾಯೀಸ್ (FWICE), ಈ ನಿರ್ಧಾರಕ್ಕೆ ನಟನ ಕಾನೂನು ನೋಟಿಸ್ ಕಾರಣವಲ್ಲ ಎಂದು ಸ್ಪಷ್ಟಪಡಿಸಿದೆ.

‘ಡಾನ್ 3’ ಚಿತ್ರದಿಂದ ರಣವೀರ್ ಸಿಂಗ್ ಹೊರನಡೆದ ಬಳಿಕ ಎಕ್ಸೆಲ್ ಎಂಟರ್‌ಟೈನ್‌ಮೆಂಟ್‌ಗೆ ನಷ್ಟ ಉಂಟಾಗಿದೆ ಎಂಬ ದೂರಿನ ಆಧಾರದಲ್ಲಿ FWICE ಅಸಹಕಾರ ಆದೇಶ ಹೊರಡಿಸಿತ್ತು. ಬಳಿಕ ರಣವೀರ್ ಸಿಂಗ್ ಒಕ್ಕೂಟಕ್ಕೆ ಲೀಗಲ್ ನೋಟಿಸ್ ಕಳುಹಿಸಿ ಕ್ರಮ ಪ್ರಶ್ನಿಸಿದ್ದರು.

ಈ ನಡುವೆ ಇಂಡಿಯನ್ ಮೋಷನ್ ಪಿಕ್ಚರ್ ಪ್ರೊಡ್ಯೂಸರ್ಸ್ ಅಸೋಸಿಯೇಷನ್ (IMPPA), ಪ್ರೊಡ್ಯೂಸರ್ಸ್ ಗಿಲ್ಡ್ ಆಫ್ ಇಂಡಿಯಾ ಹಾಗೂ CINTAA ಜೊತೆ ನಡೆದ ಚರ್ಚೆಗಳ ಬಳಿಕ ನಿಷೇಧ ಹಿಂಪಡೆಯಲಾಗಿದೆ.

FWICE ಅಧ್ಯಕ್ಷ ಬಿ.ಎನ್. ತಿವಾರಿ ಪ್ರತಿಕ್ರಿಯಿಸಿ, “ನಾವು ಯಾವುದೇ ಒತ್ತಡಕ್ಕೆ ಮಣಿದಿಲ್ಲ. 70 ವರ್ಷಗಳ ಇತಿಹಾಸ ಹೊಂದಿರುವ ಸಂಸ್ಥೆ. ಇಂತಹ ಅನೇಕ ಕಾನೂನು ನೋಟಿಸ್‌ಗಳನ್ನು ನಾವು ಎದುರಿಸಿದ್ದೇವೆ. ರಣವೀರ್ ಕಳುಹಿಸಿದ ನೋಟಿಸ್‌ಗೆ ನಮ್ಮ ಕಾನೂನು ತಂಡ ಸೂಕ್ತ ಉತ್ತರ ನೀಡಲಿದೆ” ಎಂದು ಹೇಳಿದ್ದಾರೆ.

ಇದೇ ವೇಳೆ ‘ಡಾನ್ 3’ ವಿವಾದದಿಂದ ನಿರ್ಮಾಪಕರಿಗೆ ನಷ್ಟವಾಗಿರುವುದನ್ನು ಪ್ರೊಡ್ಯೂಸರ್ಸ್ ಗಿಲ್ಡ್ ಖಂಡಿಸಿದೆ ಎಂದು FWICE ತಿಳಿಸಿದೆ. ರಣವೀರ್ ಸಿಂಗ್ ನೇರವಾಗಿ ಮಾತುಕತೆಗೆ ಬರಬಹುದು ಎಂದು ನಿರೀಕ್ಷಿಸಿದ್ದೆವು. ಆದರೆ ಅವರ ತಂಡವೇ ತಪ್ಪು ಸಲಹೆ ನೀಡಿದೆ ಎಂದು FWICE ಅಸಮಾಧಾನ ವ್ಯಕ್ತಪಡಿಸಿದೆ.

ನಿಷೇಧ ಹಿಂಪಡೆಯಲ್ಪಟ್ಟಿದ್ದರೂ, ‘ಡಾನ್ 3’ ವಿವಾದ ಮತ್ತು ಪರಿಹಾರದ ವಿಚಾರದಲ್ಲಿ ರಣವೀರ್ ಸಿಂಗ್ ಹಾಗೂ ನಿರ್ಮಾಪಕರ ನಡುವಿನ ಸಂಘರ್ಷ ಇನ್ನೂ ಮುಕ್ತಾಯಗೊಂಡಿಲ್ಲ.

error: Content is protected !!