Home Blog

ಈಜಿಪ್ಟ್ ವಿರುದ್ಧ ಅರ್ಜೆಂಟೀನಾಗೆ ರೋಚಕ ಗೆಲುವು: ಫುಟ್ಬಾಲ್ ಇತಿಹಾಸದಲ್ಲೇ ಹೊಸ ದಾಖಲೆ ಬರೆದ ಮೆಸ್ಸಿ!

ಅಟ್ಲಾಂಟಾ: ಅರ್ಜೆಂಟೀನಾ ನಾಯಕ ಲಿಯೋನೆಲ್ ಮೆಸ್ಸಿ ಮತ್ತೊಮ್ಮೆ ಫುಟ್ಬಾಲ್ ಲೋಕದಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈಜಿಪ್ಟ್ ವಿರುದ್ಧದ ಫಿಫಾ ವಿಶ್ವಕಪ್ ಪ್ರಿ-ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಗೋಲು ದಾಖಲಿಸುವ ಮೂಲಕ ವಿಶ್ವಕಪ್ ಇತಿಹಾಸದಲ್ಲೇ ಸತತ ಆರು ನಾಕೌಟ್ ಪಂದ್ಯಗಳಲ್ಲಿ ಗೋಲು ಬಾರಿಸಿದ ಮೊದಲ ಆಟಗಾರ ಎಂಬ ಅಪೂರ್ವ ವಿಶ್ವದಾಖಲೆ ತಮ್ಮದಾಗಿಸಿಕೊಂಡಿದ್ದಾರೆ.

ತೀವ್ರ ಪೈಪೋಟಿಯ ಈ ಪಂದ್ಯದಲ್ಲಿ ಅರ್ಜೆಂಟೀನಾ ಆರಂಭದಲ್ಲಿ ಸಂಕಷ್ಟಕ್ಕೆ ಸಿಲುಕಿತ್ತು. ಪಂದ್ಯದ 67ನೇ ನಿಮಿಷದವರೆಗೂ ಈಜಿಪ್ಟ್ 2-0 ಗೋಲುಗಳ ಮುನ್ನಡೆ ಸಾಧಿಸಿ ಅರ್ಜೆಂಟೀನಾವನ್ನು ಟೂರ್ನಿಯಿಂದ ಹೊರಹಾಕುವ ಹಂತಕ್ಕೆ ತಳ್ಳಿತ್ತು.

ಆದರೆ ಕೊನೆಯ ಕ್ಷಣಗಳಲ್ಲಿ ಅರ್ಜೆಂಟೀನಾ ಅದ್ಭುತ ಪುನರಾಗಮನ ಮಾಡಿತು. 79ನೇ ನಿಮಿಷದಲ್ಲಿ ರೊಮೆರೊ ಮೊದಲ ಗೋಲು ಬಾರಿಸಿದರೆ, 83ನೇ ನಿಮಿಷದಲ್ಲಿ ಲಿಯೋನೆಲ್ ಮೆಸ್ಸಿ ಸಮಬಲದತ್ತ ತಂಡವನ್ನು ಮುನ್ನಡೆಸುವ ಮಹತ್ವದ ಗೋಲು ದಾಖಲಿಸಿದರು. ಬಳಿಕ 90ನೇ ನಿಮಿಷದಲ್ಲಿ ಎಂಜೊ ಫೆರ್ನಾಂಡಿಸ್ ಗೆಲುವಿನ ಗೋಲು ಸಿಡಿಸುವ ಮೂಲಕ ಅರ್ಜೆಂಟೀನಾಗೆ 3-2 ಅಂತರದ ರೋಚಕ ಜಯ ತಂದುಕೊಟ್ಟರು.

ಪಂದ್ಯದಲ್ಲಿ ಮೆಸ್ಸಿ ಆರಂಭದಲ್ಲಿ ಪೆನಾಲ್ಟಿ ಅವಕಾಶವನ್ನು ತಪ್ಪಿಸಿಕೊಂಡಿದ್ದರೂ, ನಿರ್ಣಾಯಕ ಕ್ಷಣದಲ್ಲಿ ಗೋಲು ಬಾರಿಸುವ ಮೂಲಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಅರ್ಜೆಂಟೀನಾ ಟೂರ್ನಿಯಿಂದ ಹೊರಬೀಳುವ ಭೀತಿಯಲ್ಲಿದ್ದ ವೇಳೆ ಮೆಸ್ಸಿಯ ಅನುಭವ ಮತ್ತು ನಾಯಕತ್ವ ಮತ್ತೊಮ್ಮೆ ತಂಡಕ್ಕೆ ಆಸರೆಯಾಯಿತು.

ಈ ಗೆಲುವಿನೊಂದಿಗೆ ಅರ್ಜೆಂಟೀನಾ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದು, ಮೆಸ್ಸಿ ಫಿಫಾ ವಿಶ್ವಕಪ್ ಇತಿಹಾಸದಲ್ಲಿ ಮತ್ತೊಂದು ಅಪರೂಪದ ದಾಖಲೆಯನ್ನು ತಮ್ಮ ಹೆಸರಿಗೆ ಸೇರಿಸಿಕೊಂಡಿದ್ದಾರೆ.

ಇದರ ಜೊತೆಗೆ, ಮೆಸ್ಸಿ ಪ್ರಸ್ತುತ ವಿಶ್ವಕಪ್ ಗೋಲ್ಡನ್ ಬೂಟ್ ಸ್ಪರ್ಧೆಯಲ್ಲಿ 8 ಗೋಲುಗಳೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ. ಫ್ರಾನ್ಸ್‌ನ ಕೈಲಿಯನ್ ಎಂಬಪ್ಪೆ ಹಾಗೂ ನಾರ್ವೆಯ ಎರ್ಲಿಂಗ್ ಹಾಲೆಂಡ್ ತಲಾ 7 ಗೋಲುಗಳೊಂದಿಗೆ ನಂತರದ ಸ್ಥಾನದಲ್ಲಿದ್ದಾರೆ.

ಚನ್ನಪಟ್ಟಣ ತಹಶೀಲ್ದಾರ್ ಮೇಲಿನ ಹಲ್ಲೆ ಪ್ರಕರಣ ಪರಿಶೀಲಿಸಿ ಕ್ರಮ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಚನ್ನಪಟ್ಟಣ ತಹಶೀಲ್ದಾರ್ ಮೇಲಿನ ಹಲ್ಲೆ ಪ್ರಕರಣ ರಾಜ್ಯದಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ, ಪ್ರಕರಣದ ಸಂಪೂರ್ಣ ಮಾಹಿತಿ ಪಡೆದು ಪರಿಶೀಲನೆ ನಡೆಸಿ ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಚನ್ನಪಟ್ಟಣ ತಹಶೀಲ್ದಾರ್ ಮೇಲಿನ ಹಲ್ಲೆ ಪ್ರಕರಣ ನನ್ನ ಗಮನಕ್ಕೆ ಬಂದಿದೆ. ಮೊದಲು ಸಂಪೂರ್ಣ ಮಾಹಿತಿ ತರಿಸಿಕೊಳ್ಳುತ್ತೇನೆ. ಪ್ರಕರಣದ ಎಲ್ಲ ಅಂಶಗಳನ್ನು ಪರಿಶೀಲಿಸಿದ ಬಳಿಕ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ” ಎಂದು ಹೇಳಿದರು.

ಹುಣಸೂರು ಶಾಸಕ ಹರೀಶ್ ಗೌಡ ಅವರ ಪತ್ನಿ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಕಾಮೆಂಟ್ ಮಾಡಿರುವ ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ಅವರು, ಈ ಸಂಬಂಧ ಈಗಾಗಲೇ ದೂರು ದಾಖಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ ಎಂದು ತಿಳಿಸಿದರು.

ಇತ್ತೀಚೆಗೆ ನಟಿಯೊಬ್ಬರ ಹೆಸರಿನಲ್ಲಿ ಎಐ (AI) ತಂತ್ರಜ್ಞಾನ ಬಳಸಿ ನಕಲಿ ವಿಡಿಯೋ ಸೃಷ್ಟಿಸಿದ ಪ್ರಕರಣವನ್ನೂ ಉಲ್ಲೇಖಿಸಿದ ಸಚಿವರು, ಇಂತಹ ಸೈಬರ್ ಪ್ರಕರಣಗಳ ತನಿಖೆಗೆ ಸ್ವಲ್ಪ ಸಮಯ ಬೇಕಾಗುತ್ತದೆ. “ಯಾರೇ ಆಗಿರಲಿ, ಕಾನೂನಿನ ಮುಂದೆ ಎಲ್ಲರೂ ಸಮಾನರು. ಪ್ರತಿಯೊಬ್ಬರಿಗೂ ನ್ಯಾಯ ದೊರೆಯುವಂತೆ ಕ್ರಮ ಕೈಗೊಳ್ಳಲಾಗುತ್ತದೆ” ಎಂದು ಹೇಳಿದರು.

ಬರ ಪರಿಸ್ಥಿತಿ ಕುರಿತು ಮಾತನಾಡಿದ ಪ್ರಿಯಾಂಕ್ ಖರ್ಗೆ, ರಾಜ್ಯದ ಪರಿಸ್ಥಿತಿಯ ಸಮಗ್ರ ವರದಿಯನ್ನು ಸಿದ್ಧಪಡಿಸಿ ಕೇಂದ್ರ ಸರ್ಕಾರಕ್ಕೆ ಪರಿಹಾರಕ್ಕಾಗಿ ಸಲ್ಲಿಸಲಾಗುವುದು ಎಂದು ತಿಳಿಸಿದರು.

“ಮುಖ್ಯಮಂತ್ರಿಗಳು ಈಗಾಗಲೇ ಅಗತ್ಯ ಸೂಚನೆ ನೀಡಿದ್ದಾರೆ. ಎನ್‌ಡಿಆರ್‌ಎಫ್ (NDRF) ಮಾರ್ಗಸೂಚಿಗಳ ಪ್ರಕಾರ ವರದಿ ಸಿದ್ಧಪಡಿಸಲಾಗುತ್ತದೆ. ಜಿಲ್ಲೆಗಳಿಂದ ನೆಲಮಟ್ಟದ ಮಾಹಿತಿ ಸಂಗ್ರಹಿಸಲಾಗುತ್ತಿದ್ದು,

ಬಿತ್ತನೆ, ಮೇವು, ಕುಡಿಯುವ ನೀರು ಸೇರಿದಂತೆ ಎಲ್ಲ ವಿವರಗಳನ್ನು ಒಳಗೊಂಡ ವರದಿ ಸಿದ್ಧವಾದ ಬಳಿಕ ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗುತ್ತದೆ. ನಂತರ ಕೇಂದ್ರದ ತಂಡ ರಾಜ್ಯಕ್ಕೆ ಭೇಟಿ ನೀಡಿ ಪರಿಸ್ಥಿತಿ ಪರಿಶೀಲಿಸಿ ಬರ ಘೋಷಣೆ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲಿದೆ” ಎಂದು ಅವರು ಹೇಳಿದರು.

SIR ಕರ್ತವ್ಯಕ್ಕೆ ತೆರಳಿದ್ದ BLOಗೆ ಜಾತಿ ನಿಂದನೆ ಆರೋಪ: ಮಹಿಳೆ ವಿರುದ್ಧ ಎಸ್ಸಿ/ಎಸ್ಟಿ ಕಾಯ್ದೆಯಡಿ ಪ್ರಕರಣ ದಾಖಲು

ಮಂಗಳೂರು: ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಕರ್ತವ್ಯಕ್ಕೆ ತೆರಳಿದ್ದ ದಲಿತ ಸಮುದಾಯದ ಬೂತ್‌ ಮಟ್ಟದ ಅಧಿಕಾರಿ (ಬಿಎಲ್‌ಒ) ಅವರಿಗೆ ಜಾತಿ ನಿಂದನೆ ಮಾಡಿ ಅವಮಾನಿಸಲಾಗಿದೆ ಎಂಬ ಆರೋಪ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಿರ್ಲಾಲು ಗ್ರಾಮದಲ್ಲಿ ಕೇಳಿಬಂದಿದೆ.

ಈ ಸಂಬಂಧ ಮಹಿಳೆಯೊಬ್ಬರ ವಿರುದ್ಧ ಎಸ್ಸಿ/ಎಸ್ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳೀಯ ಅಂಗನವಾಡಿ ಕಾರ್ಯಕರ್ತೆಯಾಗಿರುವ ಬಿಎಲ್‌ಒ, ಜುಲೈ 6ರಂದು ಎಸ್‌ಐಆರ್ ಪ್ರಕ್ರಿಯೆಗಾಗಿ ಎಎಲ್‌ಒ ಮಾಧವ್ ಅವರೊಂದಿಗೆ ಶಿರ್ಲಾಲು ಗ್ರಾಮದ ಪಲ್ಲದೋಡಿ ಕಾಳಿಕಾಂಬ ನಿವಾಸಿ ಯಶೋಧ ಆಚಾರಿ ಅವರ ಮನೆಗೆ ತೆರಳಿದ್ದರು.

ಮನೆಯ ಅಂಗಳಕ್ಕೆ ಪ್ರವೇಶಿಸುತ್ತಿದ್ದ ವೇಳೆ, “ನೀನು ಅಲ್ಲಿಯೇ ನಿಲ್ಲು, ನಿಮ್ಮ ಜಾತಿಯವರು ಈ ಕಡೆ ಬರಬಾರದು” ಎಂದು ಹೇಳಿ ಮನೆಯ ಸಿಟ್‌ಔಟ್‌ಗೆ ಪ್ರವೇಶಿಸದಂತೆ ಮೆಟ್ಟಿಲಿನ ಬಳಿಯೇ ತಡೆದು ನಿಲ್ಲಿಸಲಾಯಿತು. ಈ ಮೂಲಕ ಜಾತಿ ನಿಂದನೆ ಮಾಡಿ ಸಾರ್ವಜನಿಕವಾಗಿ ಅವಮಾನಿಸಲಾಗಿದೆ ಎಂದು ಬಿಎಲ್‌ಒ ಜುಲೈ 7ರಂದು ಪೊಲೀಸರಿಗೆ ದೂರು ನೀಡಿದ್ದಾರೆ.

ದೂರಿನ ಆಧಾರದ ಮೇಲೆ ಆರೋಪಿ ಯಶೋಧ ಆಚಾರಿ ವಿರುದ್ಧ ಎಸ್ಸಿ/ಎಸ್ಟಿ (ದೌರ್ಜನ್ಯ ತಡೆ) ಕಾಯ್ದೆ-2015ರ ಸೆಕ್ಷನ್ 3(1)(r) ಹಾಗೂ 3(2)(va) ಅಡಿಯಲ್ಲಿ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಕರ್ನಾಟಕದಲ್ಲಿ ಎಸ್‌ಐಆರ್ ಕರ್ತವ್ಯದ ವೇಳೆ ಜಾತಿ ನಿಂದನೆ ಆರೋಪದಡಿ ದಾಖಲಾಗಿರುವ ಮೊದಲ ಪ್ರಕರಣ ಇದಾಗಿದೆ ಎಂದು ಮೂಲಗಳು ತಿಳಿಸಿವೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದ ಸಾಕ್ಷಿ ಬೆದರಿಕೆ: ‘ಪ್ರಭಾವಿ’ಗಳ ಪಾತ್ರದ ಶಂಕೆ, ತನಿಖೆ ಚುರುಕು

ಬೆಂಗಳೂರು: ನಟ ದರ್ಶನ್ ಆರೋಪಿ ಆಗಿರುವ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸಾಕ್ಷಿಗೆ ಬೆದರಿಕೆ ಹಾಕಿದ ಆರೋಪದ ತನಿಖೆ ತೀವ್ರಗೊಂಡಿದ್ದು, ಪ್ರಕರಣದ ಹಿಂದೆ ಕೆಲ ‘ಪ್ರಭಾವಿ’ ವ್ಯಕ್ತಿಗಳ ಕೈವಾಡವಿರುವ ಶಂಕೆ ಪೊಲೀಸರಿಗೆ ಮೂಡಿದೆ. ಈ ಹಿನ್ನೆಲೆಯಲ್ಲಿ ಅವರ ಪಾತ್ರವನ್ನು ಪತ್ತೆಹಚ್ಚಲು ಕಾಮಾಕ್ಷಿಪಾಳ್ಯ ಪೊಲೀಸರು ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿಗೆ ಬೆದರಿಕೆ ಹಾಕಿದ ಆರೋಪದಡಿ ಪುನೀತ್, ಸುಹಾಸ್ ಹಾಗೂ ವೇಣು ಎಂಬ ಮೂವರನ್ನು ಈಗಾಗಲೇ ಬಂಧಿಸಲಾಗಿದ್ದು, ಅವರನ್ನು ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ತನಿಖೆ ವೇಳೆ ಆರೋಪಿಗಳಿಂದ ಹೇಳಿಕೆ ಮತ್ತು ಮರು ಹೇಳಿಕೆಗಳನ್ನು ಪಡೆಯಲಾಗುತ್ತಿದ್ದು, ಪ್ರಮುಖ ಆರೋಪಿ ಪುನೀತ್ ಪದೇ ಪದೇ ತನ್ನ ಹೇಳಿಕೆಯನ್ನು ಬದಲಾಯಿಸುತ್ತಿರುವುದಾಗಿ ತಿಳಿದುಬಂದಿದೆ. ಸಾಕ್ಷಿಯ ಹೇಳಿಕೆಯನ್ನು ಬದಲಾಯಿಸಲು ‘ಡೀಲ್’ ಪಡೆದಿದ್ದಾನೆ ಎಂಬ ಅನುಮಾನವೂ ವ್ಯಕ್ತವಾಗಿದ್ದು, ಇದು ತನಿಖೆಗೆ ಸವಾಲಾಗಿ ಪರಿಣಮಿಸಿದೆ ಎನ್ನಲಾಗಿದೆ.

ಆರೋಪಿಗಳ ಮೊಬೈಲ್‌ಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ (ಎಫ್‌ಎಸ್‌ಎಲ್) ಕಳುಹಿಸಲಾಗಿದ್ದು, ವರದಿಗಾಗಿ ಪೊಲೀಸರು ಕಾಯುತ್ತಿದ್ದಾರೆ. ಬಂಧನಕ್ಕೂ ಮುನ್ನ ಮೊಬೈಲ್ ಕರೆ ವಿವರಗಳು, ವಾಟ್ಸ್‌ಆ್ಯಪ್ ಚಾಟ್ ಸೇರಿದಂತೆ ಹಲವು ಮಾಹಿತಿಗಳನ್ನು ಆರೋಪಿಗಳು ಅಳಿಸಿದ್ದರೂ, ಫಾರೆನ್ಸಿಕ್ ತಂತ್ರಜ್ಞಾನದ ಮೂಲಕ ಅವುಗಳನ್ನು ಮರುಪಡೆಯುವ ಪ್ರಯತ್ನ ನಡೆಯುತ್ತಿದೆ.

ಸಾಕ್ಷಿಗೆ ಬೆದರಿಕೆ ಹಾಕಿದ ಸಂದರ್ಭದಲ್ಲಿ ಕಾನ್ಫರೆನ್ಸ್ ಕಾಲ್ ಬಳಸಲಾಗಿತ್ತು ಎಂಬ ಮಾಹಿತಿ ಲಭ್ಯವಾಗಿದ್ದು, ಆ ಸಂಭಾಷಣೆಯಲ್ಲಿ ಆರೋಪಿಗಳ ಹೊರತಾಗಿ ಇನ್ನಾರು ಭಾಗಿಯಾಗಿದ್ದರು ಎಂಬುದು ಎಫ್‌ಎಸ್‌ಎಲ್ ವರದಿಯ ಬಳಿಕ ಬಹಿರಂಗವಾಗುವ ಸಾಧ್ಯತೆ ಇದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ನ್ಯಾಯಾಲಯದಲ್ಲಿ ನಡೆಯುತ್ತಿರುವ ವೇಳೆ, ಪ್ರಕರಣದ 49ನೇ ಸಾಕ್ಷಿಯಾಗಿರುವ ದುರ್ಗಾ ಬಾರ್‌ನ ಸಿಬ್ಬಂದಿ ಸಂದೀಪ್ ಅವರಿಗೆ ಆಕರ್ಷ್ ಎಂಬ ವ್ಯಕ್ತಿಯ ಮೂಲಕ ಕರೆ ಮಾಡಿ, ನ್ಯಾಯಾಲಯದಲ್ಲಿ ತಾವು ಹೇಳಿದಂತೆ ಸಾಕ್ಷ್ಯ ನೀಡುವಂತೆ ಒತ್ತಡ ಹೇರಲಾಗಿತ್ತು ಎನ್ನಲಾಗಿದೆ.

ಆದರೆ ಸಂದೀಪ್ ನ್ಯಾಯಾಲಯದ ಮುಂದೆ ತಮಗೆ ಸುಳ್ಳು ಸಾಕ್ಷ್ಯ ಹೇಳುವಂತೆ ಬೆದರಿಕೆ ಹಾಕಲಾಗಿದೆ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆಯ ಆಧಾರದ ಮೇಲೆ ಕಾಮಾಕ್ಷಿಪಾಳ್ಯ ಪೊಲೀಸರು ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡು ಮೂವರು ಆರೋಪಿಗಳನ್ನು ಬಂಧಿಸಿದ್ದು, ಪ್ರಕರಣದ ಹಿಂದಿರುವ ಇತರರ ಪಾತ್ರದ ಬಗ್ಗೆಯೂ ತನಿಖೆ ಮುಂದುವರಿಸಿದ್ದಾರೆ.

GBA ವಾರ್ಡ್ʼಗಳಲ್ಲಿ ಪರ್ಯಾಯ SIRಗೆ ತಡೆ ಕೋರಿ ಅರ್ಜಿ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಕೆಲವು ವಾರ್ಡ್‌ಗಳಲ್ಲಿ ಪರ್ಯಾಯ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ನಡೆಸಲು ರಾಜ್ಯ ಚುನಾವಣಾ ಆಯೋಗ ಹೊರಡಿಸಿರುವ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ರಾಜ್ಯ ಸರ್ಕಾರ, ರಾಜ್ಯ ಚುನಾವಣಾ ಆಯೋಗ ಹಾಗೂ ಕೇಂದ್ರ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ ಮಾಡಿದೆ.

ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ಪೀಠವು ಅರ್ಜಿ ವಿಚಾರಣೆ ನಡೆಸಿ ಪ್ರತಿವಾದಿಗಳಿಗೆ ನೋಟಿಸ್ ನೀಡಿದ್ದು, ಪ್ರಕರಣದ ಮುಂದಿನ ವಿಚಾರಣೆಯನ್ನು ಜುಲೈ 15ಕ್ಕೆ ಮುಂದೂಡಿದೆ.

ಜಿಬಿಎ ವ್ಯಾಪ್ತಿಯ ಕೆಲವು ವಾರ್ಡ್‌ಗಳಲ್ಲಿ ಪರ್ಯಾಯ ಎಸ್‌ಐಆರ್ ನಡೆಸುವ ಕುರಿತು ರಾಜ್ಯ ಚುನಾವಣಾ ಆಯೋಗವು ಜೂನ್ 19ರಂದು ಹೊರಡಿಸಿದ್ದ ಆದೇಶವನ್ನು ರದ್ದುಪಡಿಸುವಂತೆ ಕೋರಿ ಎಂ. ವಿವೇಕ್ ಸೇರಿದಂತೆ ಐವರು ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ವೇಳೆ ರಾಜ್ಯ ಸರ್ಕಾರವು ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೋರಿದ ಹಿನ್ನೆಲೆಯಲ್ಲಿ ನ್ಯಾಯಾಲಯ ನೋಟಿಸ್ ನೀಡಿ ವಿಚಾರಣೆ ಮುಂದೂಡಿದೆ.

ಅರ್ಜಿಯಲ್ಲಿ ಏನಿದೆ?

ಅರ್ಜಿದಾರರ ಪ್ರಕಾರ, 2025ರ ಅಕ್ಟೋಬರ್ 27ರಂದು ಕೇಂದ್ರ ಚುನಾವಣಾ ಆಯೋಗ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ನಡೆಸುವುದಾಗಿ ಪ್ರಕಟಿಸಿತ್ತು. ಅದರಂತೆ 2026ರ ಜೂನ್ 16ರಂದು ರಾಜ್ಯದ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯನ್ನು ಅಂತಿಮಗೊಳಿಸಲಾಗಿತ್ತು.

ಆದರೆ, ಇದರ ಮೂರೇ ದಿನಗಳ ಬಳಿಕ ಜೂನ್ 19ರಂದು ರಾಜ್ಯ ಚುನಾವಣಾ ಆಯೋಗವು ಜಿಬಿಎ ವ್ಯಾಪ್ತಿಯ ಕೆಲವು ವಾರ್ಡ್‌ಗಳಲ್ಲಿ ಪ್ರತ್ಯೇಕ ಎಸ್‌ಐಆರ್ ನಡೆಸಲು ಆದೇಶ ಹೊರಡಿಸಿದೆ. ಇದೇ ವೇಳೆ ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 26ರಿಂದ ಜಿಬಿಎ ಸೇರಿದಂತೆ ರಾಜ್ಯಾದ್ಯಂತ ಮನೆ-ಮನೆಗೆ ತೆರಳಿ ಎಸ್‌ಐಆರ್ ಸಮೀಕ್ಷೆಯೂ ಆರಂಭವಾಗಿದೆ.

ಒಂದೇ ಅವಧಿಯಲ್ಲಿ ಎರಡು ಪ್ರತ್ಯೇಕ ಎಸ್‌ಐಆರ್ ಪ್ರಕ್ರಿಯೆಗಳು ನಡೆಯುವುದರಿಂದ ಮತದಾರರಲ್ಲಿ ಗೊಂದಲ ಉಂಟಾಗುವ ಸಾಧ್ಯತೆ ಇದೆ. ಜೊತೆಗೆ ಇದು ಕೇಂದ್ರ ಚುನಾವಣಾ ಆಯೋಗದ ನಿರ್ದೇಶನಗಳಿಗೆ ವಿರುದ್ಧವಾಗಿದೆ ಎಂದು ಅರ್ಜಿದಾರರು ವಾದಿಸಿದ್ದು, ರಾಜ್ಯ ಚುನಾವಣಾ ಆಯೋಗದ ಜೂನ್ 19ರ ಆದೇಶವನ್ನು ರದ್ದುಪಡಿಸುವಂತೆ ನ್ಯಾಯಾಲಯವನ್ನು ಕೋರಿದ್ದಾರೆ.

ಜುಲೈ ಮೊದಲ ವಾರದಲ್ಲಿ ಉತ್ತಮ ಮಳೆ: ದೇಶದ ಮಳೆ ಕೊರತೆ ಶೇಕಡಾ 12ಕ್ಕೆ ಇಳಿದಿದೆ – ಕೇಂದ್ರ ಸರ್ಕಾರ ಮಾಹಿತಿ

ನವದೆಹಲಿ: ಜೂನ್ ತಿಂಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಕಾರಣ ದೇಶದಲ್ಲಿ ಮಾನ್ಸೂನ್ ಕೊರತೆಯ ಆತಂಕ ಎದುರಾಗಿತ್ತು. ಆದರೆ ಜುಲೈ ಮೊದಲ ವಾರದಲ್ಲಿ ದೇಶಾದ್ಯಂತ ಉತ್ತಮ ಮಳೆಯಾಗಿರುವ ಹಿನ್ನೆಲೆಯಲ್ಲಿ ಮಳೆ ಕೊರತೆ ಶೇ.12ಕ್ಕೆ ಇಳಿದಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಖಾರಿಫ್ ಬೆಳೆ ಹಂಗಾಮು ಹಾಗೂ ಎಲ್ ನಿನೊದ ಸಂಭಾವ್ಯ ಪರಿಣಾಮ ಕುರಿತು ಪ್ರಧಾನ ಕಾರ್ಯದರ್ಶಿ ಪಿ.ಕೆ. ಮಿಶ್ರಾ ಅವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಪರಿಶೀಲನಾ ಸಭೆಯಲ್ಲಿ ಈ ಮಾಹಿತಿ ಹಂಚಿಕೊಳ್ಳಲಾಗಿದೆ ಎಂದು ಪ್ರಧಾನ ಮಂತ್ರಿ ಕಚೇರಿ (ಪಿಎಂಒ) ಪ್ರಕಟಿಸಿದೆ.

ಸಭೆಯಲ್ಲಿ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಅಧಿಕಾರಿಗಳು ಜೂನ್‌ನಿಂದ ಜುಲೈ 7ರವರೆಗಿನ ಮಳೆಯ ಸ್ಥಿತಿಗತಿಗಳ ಕುರಿತು ವಿವರ ನೀಡಿದರು. ಗುಜರಾತ್, ಮಧ್ಯಪ್ರದೇಶ, ಛತ್ತೀಸ್‌ಗಢ ಹಾಗೂ ಮಹಾರಾಷ್ಟ್ರದಲ್ಲಿ ಮಾನ್ಸೂನ್ ಸುಮಾರು 10 ದಿನ ತಡವಾಗಿ ಆರಂಭವಾದರೂ, ಜುಲೈ ಮೊದಲ ವಾರದಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ ದಾಖಲಾಗಿದೆ ಎಂದು ತಿಳಿಸಿದರು.

ಐಎಂಡಿ ಅಂದಾಜಿನ ಪ್ರಕಾರ, ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ಎಲ್ ನಿನೊ ಪ್ರಭಾವ ಮಧ್ಯಮ ಮಟ್ಟಕ್ಕೆ ದುರ್ಬಲವಾಗುವ ಸಾಧ್ಯತೆ ಇದ್ದು, ಜುಲೈ ತಿಂಗಳಲ್ಲಿ ಸಾಮಾನ್ಯಕ್ಕಿಂತ ಶೇ.30ರಷ್ಟು ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ.

ಸಭೆಯಲ್ಲಿ ಕೃಷಿ, ವಿದ್ಯುತ್, ಕುಡಿಯುವ ನೀರು, ಆರೋಗ್ಯ, ಗ್ರಾಮೀಣಾಭಿವೃದ್ಧಿ, ಪಶುಸಂಗೋಪನೆ, ಭೂ ವಿಜ್ಞಾನ, ಹಣಕಾಸು, ರಸಗೊಬ್ಬರ, ಮಾಹಿತಿ ಮತ್ತು ಪ್ರಸಾರ ಸೇರಿದಂತೆ 15ಕ್ಕೂ ಹೆಚ್ಚು ಸಚಿವಾಲಯಗಳ ಹಿರಿಯ ಅಧಿಕಾರಿಗಳು ಹಾಗೂ ಭಾರತೀಯ ಹವಾಮಾನ ಇಲಾಖೆ ಮತ್ತು ಕೇಂದ್ರ ಜಲ ಆಯೋಗದ ಪ್ರತಿನಿಧಿಗಳು ಭಾಗವಹಿಸಿದ್ದರು.

ಖಾರಿಫ್ ಬೆಳೆಗಳ ರಕ್ಷಣೆಗಾಗಿ ಮಳೆ, ಜಲಾಶಯಗಳ ನೀರಿನ ಸಂಗ್ರಹ, ಬೆಳೆ ಬಿತ್ತನೆ, ನೀರಿನ ಲಭ್ಯತೆ, ಕೀಟ ಹಾಗೂ ರೋಗಗಳ ಸ್ಥಿತಿಗತಿಗಳ ಬಗ್ಗೆ ರಾಜ್ಯಗಳೊಂದಿಗೆ ಪ್ರತಿ ವಾರ ಬೆಳೆ-ಹವಾಮಾನ ಪರಿಶೀಲನಾ ಸಭೆಗಳನ್ನು ನಡೆಸಲಾಗುತ್ತಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಇದಲ್ಲದೆ, ಮಳೆ ಕೊರತೆ ಎದುರಿಸುತ್ತಿರುವ 262 ಜಿಲ್ಲೆಗಳಿಗೆ ವಿಶೇಷ ಕೃಷಿ ಕಾರ್ಯಯೋಜನೆ ವಿಸ್ತರಿಸಲಾಗಿದ್ದು, ಭಾರತೀಯ ಕೃಷಿ ಸಂಶೋಧನಾ ಮಂಡಳಿ (ICAR) ಕೃಷಿ ವಿಜ್ಞಾನ ಕೇಂದ್ರಗಳಿಗೆ ಎಲ್ ನಿನೊ ಪರಿಸ್ಥಿತಿ ನಿರ್ವಹಣೆಗೆ ಸಂಬಂಧಿಸಿದ ಮಾರ್ಗಸೂಚಿಗಳನ್ನು ನೀಡಿದೆ ಎಂದು ಸರ್ಕಾರ ಮಾಹಿತಿ ನೀಡಿದೆ.

ತುಂಗಾಭದ್ರೆಯಲ್ಲಿ ನೀರಿನ ಮಟ್ಟ ಏರಿಕೆ: ಉಕ್ಕಡಗಾತ್ರಿ ಶ್ರೀಕ್ಷೇತ್ರದಲ್ಲಿ ಪ್ರವಾಹದ ಆತಂಕ

ದಾವಣಗೆರೆ: ಮಲೆನಾಡು ಭಾಗದಲ್ಲಿ ಕಳೆದ ಎರಡು–ಮೂರು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯ ಪರಿಣಾಮ ತುಂಗಾಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದ್ದು, ಹರಿಹರ ತಾಲೂಕಿನ ಪ್ರಸಿದ್ಧ ಉಕ್ಕಡಗಾತ್ರಿ ಶ್ರೀಕ್ಷೇತ್ರದಲ್ಲಿ ಪ್ರವಾಹದ ಆತಂಕ ಎದುರಾಗಿದೆ.

ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತುಂಗಾ ಅಣೆಕಟ್ಟೆಯಿಂದ ಅಪಾರ ಪ್ರಮಾಣದ ನೀರನ್ನು ನದಿಗೆ ಹರಿಬಿಡಲಾಗಿದೆ. ಇದರಿಂದ ಹರಿಹರ ತಾಲೂಕಿನ ಮೂಲಕ ಹರಿಯುವ ತುಂಗಾಭದ್ರಾ ನದಿಯ ನೀರಿನ ಮಟ್ಟ ದಿಢೀರ್ ಏರಿಕೆಯಾಗಿ, ಉಕ್ಕಡಗಾತ್ರಿ ಶ್ರೀಕ್ಷೇತ್ರದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೀರು ಆವರಿಸಿದೆ.

ನದಿಯ ಅಕ್ಕಪಕ್ಕದಲ್ಲಿರುವ ಕರಿಬಸವೇಶ್ವರ ದೇವಸ್ಥಾನದ ಸ್ನಾನಘಟ್ಟ, ಜವಳಘಟ್ಟ ಹಾಗೂ ಹೂವು-ಹಣ್ಣು ವ್ಯಾಪಾರದ ಅಂಗಡಿಗಳು ಜಲಾವೃತವಾಗಿವೆ. ಮುನ್ನೆಚ್ಚರಿಕೆ ಕ್ರಮವಾಗಿ ಭಕ್ತರು ನದಿ ಪಾತ್ರಕ್ಕೆ ಇಳಿಯದಂತೆ ದೇವಾಲಯದ ಆಡಳಿತ ಮಂಡಳಿ ಸೂಚನೆ ನೀಡಿದೆ.

ಭದ್ರಾ ಜಲಾಶಯದಿಂದಲೂ ನೀರು ಬಿಡುಗಡೆ ಮಾಡಿದರೆ, ನದಿ ದಂಡೆಯಲ್ಲಿರುವ ಗಣೇಶ ದೇವಸ್ಥಾನವೂ ಜಲಾವೃತವಾಗುವ ಸಾಧ್ಯತೆ ಇದೆ. ಜೊತೆಗೆ ನದಿಯ ಸೆಳೆತ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಭಕ್ತರು ಆ ಭಾಗಕ್ಕೆ ತೆರಳದಂತೆ ದೇವಾಲಯದ ಆಡಳಿತ ಮಂಡಳಿ ಸೂಚನಾ ಫಲಕ ಅಳವಡಿಸಲು ಮುಂದಾಗಿದೆ.

ಸದ್ಯ ನದಿಯ ಹರಿವು ನಿಯಂತ್ರಣದಲ್ಲಿದ್ದರೂ, ಮಳೆ ಇದೇ ರೀತಿ ಮುಂದುವರಿದು ನೀರಿನ ಮಟ್ಟ ಮತ್ತಷ್ಟು ಏರಿದರೆ ನಂದಿಗುಡಿಯಿಂದ ಉಕ್ಕಡಗಾತ್ರಿಗೆ ಸಂಪರ್ಕಿಸುವ ರಸ್ತೆ ಮತ್ತು ಸೇತುವೆ ಸಂಪೂರ್ಣ ಜಲಾವೃತವಾಗುವ ಸಾಧ್ಯತೆ ಇದೆ. ಅಲ್ಲದೆ ಭದ್ರಾ ಜಲಾಶಯದಿಂದ ಹೆಚ್ಚಿನ ನೀರು ಬಿಡುಗಡೆ ಮಾಡಿದರೆ ಫತ್ತೇಪುರ–ಉಕ್ಕಡಗಾತ್ರಿ ಸಂಪರ್ಕ ರಸ್ತೆ ಮತ್ತು ಸೇತುವೆಯೂ ಮುಳುಗಡೆಯಾಗುವ ಆತಂಕ ವ್ಯಕ್ತವಾಗಿದೆ.

ಆಂಬುಲೆನ್ಸ್ʼಗೆ ದಾರಿ ಬಿಡದೆ ವೀಲಿಂಗ್: ಆರು ಅಪ್ರಾಪ್ತರು ಪೊಲೀಸರ ವಶಕ್ಕೆ

ಬೆಂಗಳೂರು: ಆಂಬುಲೆನ್ಸ್‌ಗೆ ದಾರಿ ಬಿಡದೆ ನಡುರಸ್ತೆಯಲ್ಲೇ ವೀಲಿಂಗ್ ಮಾಡಿ ವಾಹನ ಸಂಚಾರಕ್ಕೆ ಅಡ್ಡಿಪಡಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಯಶವಂತಪುರ ಸಂಚಾರಿ ಪೊಲೀಸರು ಆರು ಅಪ್ರಾಪ್ತರನ್ನು ವಶಕ್ಕೆ ಪಡೆದು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

ಜುಲೈ 4ರ ಮಧ್ಯರಾತ್ರಿ ನಡೆದ ಘಟನೆಯಲ್ಲಿ ಕೆಲ ಯುವಕರು ರಸ್ತೆಯ ಮಧ್ಯಭಾಗದಲ್ಲಿ ಅಪಾಯಕಾರಿ ರೀತಿಯಲ್ಲಿ ವೀಲಿಂಗ್ ಮಾಡುತ್ತಾ ಅಂಬುಲೆನ್ಸ್ ಸೇರಿದಂತೆ ಇತರೆ ವಾಹನಗಳ ಸಂಚಾರಕ್ಕೆ ಅಡ್ಡಿಯಾಗಿದ್ದರು. ಈ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.

ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಯಶವಂತಪುರ ಸಂಚಾರಿ ಪೊಲೀಸರು ಸಿಸಿಟಿವಿ ದೃಶ್ಯಗಳು ಹಾಗೂ ಇತರೆ ಮಾಹಿತಿಗಳ ಆಧಾರದಲ್ಲಿ ತನಿಖೆ ನಡೆಸಿ, ವೀಲಿಂಗ್‌ನಲ್ಲಿ ಭಾಗಿಯಾಗಿದ್ದ ಆರು ಅಪ್ರಾಪ್ತರನ್ನು ಗುರುತಿಸಿ ವಶಕ್ಕೆ ಪಡೆದಿದ್ದಾರೆ.

ಈ ಸಂಬಂಧ ಯಶವಂತಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಈಗಾಗಲೇ ಎಫ್‌ಐಆರ್ ದಾಖಲಾಗಿದ್ದು, ಪ್ರಕರಣದ ಕುರಿತು ಮುಂದಿನ ತನಿಖೆ ಮತ್ತು ಕಾನೂನು ಕ್ರಮ ಮುಂದುವರಿದಿದೆ.

ಕಮಲ್ ಹಾಸನ್ ವಿರುದ್ಧ ಕನ್ನಡ ಭಾಷೆ ವಿವಾದ: ವಿಶೇಷ ನ್ಯಾಯಾಲಯಕ್ಕೆ ಪ್ರಕರಣ ವರ್ಗಾವಣೆ

ಬೆಂಗಳೂರು: ಕನ್ನಡ ಭಾಷೆ ಕುರಿತು ನಟ ಹಾಗೂ ರಾಜ್ಯಸಭಾ ಸದಸ್ಯ ಕಮಲ್ ಹಾಸನ್ ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ದಾಖಲಾಗಿದ್ದ ಖಾಸಗಿ ದೂರನ್ನು ಬೆಂಗಳೂರಿನ 42ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಲಾಗಿದೆ.

2025ರ ಮೇ ತಿಂಗಳಲ್ಲಿ ‘ಥಗ್ ಲೈಫ್’ ಚಿತ್ರದ ಆಡಿಯೋ ಬಿಡುಗಡೆ ಕಾರ್ಯಕ್ರಮದಲ್ಲಿ ಕಮಲ್ ಹಾಸನ್, “ತಮಿಳು ಭಾಷೆಯೇ ಕನ್ನಡ ಭಾಷೆಯ ತಾಯಿ” ಎಂಬ ಅರ್ಥದಲ್ಲಿ ಹೇಳಿಕೆ ನೀಡಿದ್ದರು. ಈ ಹೇಳಿಕೆ ಕರ್ನಾಟಕದಲ್ಲಿ ವ್ಯಾಪಕ ವಿವಾದಕ್ಕೆ ಕಾರಣವಾಗಿದ್ದು, ವಿವಿಧ ಕನ್ನಡಪರ ಸಂಘಟನೆಗಳು ಮತ್ತು ಸಾರ್ವಜನಿಕರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು.

ಈ ಸಂಬಂಧ ಆರಂಭದಲ್ಲಿ ಕನಕಪುರ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಲಾಗಿತ್ತು. ಆದರೆ ಇತ್ತೀಚೆಗೆ ಕಮಲ್ ಹಾಸನ್ ತಮಿಳುನಾಡಿನಿಂದ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ,

ಜನಪ್ರತಿನಿಧಿಗಳ ವಿರುದ್ಧದ ಪ್ರಕರಣಗಳ ವಿಚಾರಣೆ ನಡೆಸುವ ಬೆಂಗಳೂರಿನ 42ನೇ ವಿಶೇಷ ನ್ಯಾಯಾಲಯಕ್ಕೆ ಪ್ರಕರಣವನ್ನು ವರ್ಗಾವಣೆ ಮಾಡಲಾಗಿದೆ. ಪ್ರಕರಣದ ಪ್ರಾಥಮಿಕ ವಿಚಾರಣೆ ನಡೆಸಿದ ನ್ಯಾಯಾಲಯ, ಮುಂದಿನ ವಿಚಾರಣೆಯನ್ನು ಜುಲೈ 22ಕ್ಕೆ ನಿಗದಿಪಡಿಸಿ ಮುಂದೂಡಿದೆ.

ಕರಾಚಿ ಕರಾವಳಿ ಬಳಿ ಪಾಕಿಸ್ತಾನದ ಕಾರ್ಗೋ ವಿಮಾನ ನಿಗೂಢವಾಗಿ ನಾಪತ್ತೆ!

ಇಸ್ಲಾಮಾಬಾದ್: ಪಾಕಿಸ್ತಾನದ ಕರಾಚಿ ಕರಾವಳಿಯ ಸಮೀಪ ಅರಬ್ಬಿ ಸಮುದ್ರದ ಮೇಲೆ ಹಾರಾಟ ನಡೆಸುತ್ತಿದ್ದ ಕಾರ್ಗೋ ವಿಮಾನವೊಂದು ನಿಗೂಢವಾಗಿ ನಾಪತ್ತೆಯಾಗಿದ್ದು, ಪಾಕಿಸ್ತಾನ ನೌಕಾಪಡೆ ಹಾಗೂ ರಕ್ಷಣಾ ಸಂಸ್ಥೆಗಳು ಸಮುದ್ರದಲ್ಲಿ ವ್ಯಾಪಕ ಶೋಧ ಕಾರ್ಯಾಚರಣೆ ಆರಂಭಿಸಿವೆ.

ಐವರು ಸಿಬ್ಬಂದಿಯನ್ನು ಹೊತ್ತಿದ್ದ ಬೋಯಿಂಗ್ 737 ಕಾರ್ಗೋ ವಿಮಾನವು ಮಂಗಳವಾರ ರಾತ್ರಿ ಯುಎಇಯ ಶಾರ್ಜಾದಿಂದ ಟೇಕ್‌ಆಫ್ ಆಗಿತ್ತು. ಸುಮಾರು ಎರಡು ಗಂಟೆಗಳ ಹಾರಾಟದ ಬಳಿಕ ಕರಾಚಿ ಕರಾವಳಿ ಸಮೀಪ ರೇಡಾರ್ ಸಂಪರ್ಕ ಕಳೆದುಕೊಂಡಿದ್ದು, ಬಳಿಕ ವಿಮಾನದ ಯಾವುದೇ ಸುಳಿವು ಸಿಕ್ಕಿಲ್ಲ.

ಸ್ಥಳೀಯ ಸಮಯ ರಾತ್ರಿ 9:18ರ ಸುಮಾರಿಗೆ ವಿಮಾನದಲ್ಲಿ ನ್ಯಾವಿಗೇಷನ್ ವ್ಯವಸ್ಥೆಯಲ್ಲಿ ತಾಂತ್ರಿಕ ಸಮಸ್ಯೆ ಉಂಟಾಗಿದೆ ಎಂದು ಪೈಲಟ್ ಮಾಹಿತಿ ನೀಡಿದ್ದು, ಕರಾಚಿ ಏರ್ ಟ್ರಾಫಿಕ್ ಕಂಟ್ರೋಲ್ ಕೇಂದ್ರದಿಂದ ಮಾರ್ಗದರ್ಶನ ಪಡೆಯಲಾಗಿತ್ತು. ಆದರೆ ಸಂಪರ್ಕ ಕಡಿತಗೊಳ್ಳುವ ಮುನ್ನ ಯಾವುದೇ ತುರ್ತು ಸಂದೇಶ ಅಥವಾ ಅಪಾಯದ ಸಂಕೇತವನ್ನು ವಿಮಾನದಿಂದ ರವಾನಿಸಲಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಂತ್ರಿಕ ದೋಷ ಅಥವಾ ಪ್ರತಿಕೂಲ ಹವಾಮಾನದಿಂದ ಈ ಘಟನೆ ಸಂಭವಿಸಿರಬಹುದು ಎಂದು ಶಂಕಿಸಲಾಗಿದ್ದು, ವಿಮಾನ ಅರಬ್ಬಿ ಸಮುದ್ರದಲ್ಲೇ ಪತನಗೊಂಡಿರುವ ಸಾಧ್ಯತೆಯನ್ನೂ ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.

ವಿಮಾನ ಕೊನೆಯದಾಗಿ ಕಾಣಿಸಿಕೊಂಡ ಪ್ರದೇಶದಲ್ಲಿ ಪಾಕಿಸ್ತಾನ ನೌಕಾಪಡೆ, ಕರಾವಳಿ ಕಾವಲು ಪಡೆ ಹಾಗೂ ಹೆಲಿಕಾಪ್ಟರ್‌ಗಳ ಮೂಲಕ ಶೋಧ ಕಾರ್ಯಾಚರಣೆ ಮುಂದುವರಿದಿದೆ. ಸಮುದ್ರದಲ್ಲಿ ಬಿರುಗಾಳಿ ಮತ್ತು ಎತ್ತರದ ಅಲೆಗಳು ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗಿವೆ.

ವಿಮಾನದಲ್ಲಿದ್ದ ಸರಕುಗಳ ವಿವರವನ್ನು ಸದ್ಯಕ್ಕೆ ಅಧಿಕಾರಿಗಳು ಬಹಿರಂಗಪಡಿಸಿಲ್ಲ. ವಿಮಾನದ ಪತ್ತೆ ಹಾಗೂ ಘಟನೆಯ ನಿಖರ ಕಾರಣ ತಿಳಿಯಲು ತನಿಖೆ ಮುಂದುವರೆದಿದೆ.