ಬೆಂಗಳೂರು: ನಗರದಲ್ಲಿ ಎರಡನೇ ವಿಮಾನ ನಿಲ್ದಾಣಕ್ಕೆ ಮೂರು ಸ್ಥಳಗಳನ್ನು ಶಾರ್ಟ್ಲಿಸ್ಟ್ ಮಾಡಲಾಗಿದ್ದು, ಅದರಲ್ಲಿ ತುಮಕೂರು ಜಿಲ್ಲೆಯಲ್ಲಿ ಮಾಡುವ ಪ್ರಸ್ತಾಪ ಇಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ.
ಅಧಿವೇಶನದಲ್ಲಿ ತುಮಕೂರು ಶಾಸಕ ಜ್ಯೋತಿ ಗಣೇಶ್ ಕೇಳಿದ್ದ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಸಚಿವ ಎಂ.ಬಿ.ಪಾಟೀಲ್ ಉತ್ತರಿಸಿದರು. ಎರಡನೇ ವಿಮಾನ ನಿಲ್ದಾಣಕ್ಕೆ ಸೋಮನಹಳ್ಳಿ-ಕನಕಪುರ ರಸ್ತೆ ರಾಮನಗರ, ಚೂಡಹಳ್ಳಿ-ಕನಕಪುರ ರಸ್ತೆ ರಾಮನಗರ ಹಾಗೂ ಗುಡೆಮಾರನಹಳ್ಳಿ ನೆಲಮಂಗಲ ಎಂಬ ಮೂರು ಸ್ಥಳಗಳು ಶಾರ್ಟ್ಲಿಸ್ಟ್ ಆಗಿವೆ ಎಂದು ಸದನಕ್ಕೆ ಮಾಹಿತಿ ನೀಡಿದ ಅವರು, ಹಾರೋಹಳ್ಳಿ ಕೂಡ ಅಂತಿಮ ಪರಿಶೀಲನೆಯ ಹಂತದಲ್ಲಿದೆ ಎಂದು ಸ್ಪಷ್ಟಪಡಿಸಿದರು.
ಇದೇ ವೇಳೆ ತುಮಕೂರಿನಲ್ಲಿ ಎರಡನೇ ವಿಮಾನ ನಿಲ್ದಾಣ ಬೇಕು ಎಂದು ಪರಮೇಶ್ವರ್, ಸೋಮಣ್ಣ ಆಗ್ರಹಿಸಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಸಚಿವರು, ಕೇಂದ್ರ ಸರ್ಕಾರದ ಗ್ರೀನ್ಫೀಲ್ಡ್ ವಿಮಾನ ನಿಲ್ದಾಣ ನೀತಿಯ ಪ್ರಕಾರ, ಹಾಲಿ ಇರುವ ನಾಗರಿಕ ವಿಮಾನ ನಿಲ್ದಾಣದಿಂದ 150 ಕಿ.ಮೀ ವ್ಯಾಪ್ತಿಯಲ್ಲಿ ಇನ್ನೊಂದು ಹೊಸ ವಿಮಾನ ನಿಲ್ದಾಣಕ್ಕೆ ಸಾಮಾನ್ಯವಾಗಿ ಅನುಮತಿ ನೀಡಲಾಗುವುದಿಲ್ಲ ಎಂದು ವಿವರಿಸಿದರು.
ಒಂದು ವೇಳೆ ಈ ವ್ಯಾಪ್ತಿಯಲ್ಲಿ ವಿಮಾನ ನಿಲ್ದಾಣ ನಿರ್ಮಿಸಬೇಕಾದರೆ, ಹಾಲಿ ಇರುವ ವಿಮಾನ ನಿಲ್ದಾಣದ ಮೇಲಾಗುವ ಪ್ರಭಾವವನ್ನು ಆಧರಿಸಿ ಪ್ರತ್ಯೇಕವಾಗಿ ಪರಿಶೀಲಿಸಿ ಕೇಂದ್ರ ಸರ್ಕಾರ ಅಂತಿಮ ನಿರ್ಧಾರ ಕೈಗೊಳ್ಳಬೇಕಾಗುತ್ತದೆ ಎಂದರು.
ಮುಂಬರುವ ಬಜೆಟ್ನಲ್ಲಿ ತುಮಕೂರು ವಿಮಾನ ನಿಲ್ದಾಣಕ್ಕೆ ಹಣ ಕಾಯ್ದಿರಿಸಲಾಗುತ್ತದೆಯೇ ಎಂಬ ಪ್ರಶ್ನೆಗೆ, ಅಂತಹ ಯಾವುದೇ ಯೋಜನೆ ಸರ್ಕಾರದ ಪರಿಶೀಲನೆಯಲ್ಲಿ ಇಲ್ಲದಿರುವುದರಿಂದ ಅನುದಾನ ಹಂಚಿಕೆಯ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.

