Home Blog

ಬೆಂಡೆಕಾಯಿ ಎಲ್ಲರಿಗೂ ಒಳ್ಳೆಯದಲ್ಲವೇ? ಈ ಆರೋಗ್ಯ ಸಮಸ್ಯೆಗಳಿದ್ದವರು ಎಚ್ಚರ ವಹಿಸಿ!

0

ಬೆಂಡೆಕಾಯಿ ಬಹುತೇಕ ಮನೆಗಳಲ್ಲಿ ನಿಯಮಿತವಾಗಿ ಬಳಸುವ ತರಕಾರಿಗಳಲ್ಲಿ ಒಂದಾಗಿದೆ.

ಇದರಲ್ಲಿ ಫೈಬರ್, ವಿಟಮಿನ್‌ಗಳು, ಖನಿಜಾಂಶಗಳು ಹಾಗೂ ಆಂಟಿಆಕ್ಸಿಡೆಂಟ್‌ಗಳು ಇರುವುದರಿಂದ ಸಮತೋಲಿತ ಆಹಾರದ ಭಾಗವಾಗಿ ಸೇವಿಸಬಹುದು. ಆದರೆ ಯಾವುದೇ ಆಹಾರ ಎಲ್ಲರಿಗೂ ಒಂದೇ ರೀತಿಯಲ್ಲಿ ಪರಿಣಾಮ ಬೀರುತ್ತದೆ ಎನ್ನಲಾಗುವುದಿಲ್ಲ. ಕೆಲವು ಆರೋಗ್ಯ ಸಮಸ್ಯೆಗಳಿರುವವರು ಬೆಂಡೆಕಾಯಿಯನ್ನು ಸೇವಿಸುವ ಪ್ರಮಾಣದ ಬಗ್ಗೆ ಗಮನ ಹರಿಸುವುದು ಅಗತ್ಯ.

ಬೆಂಡೆಕಾಯಿಯಲ್ಲಿರುವ ಫೈಬರ್ ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ. ಆದರೆ ಇದರಲ್ಲಿ ಆಕ್ಸಲೇಟ್‌ಗಳೂ ಇರುವುದರಿಂದ ಕಿಡ್ನಿಯಲ್ಲಿ ಕಲ್ಲಿನ ಸಮಸ್ಯೆ ಇರುವವರು ಆಹಾರದಲ್ಲಿ ಬೆಂಡೆಕಾಯಿಯ ಪ್ರಮಾಣದ ಬಗ್ಗೆ ವೈದ್ಯರು ಅಥವಾ ಆಹಾರ ತಜ್ಞರ ಸಲಹೆ ಪಡೆಯುವುದು ಉತ್ತಮ.

ಕಿಡ್ನಿಯಲ್ಲಿ ಕಲ್ಲು ಇದ್ದವರು ಬೆಂಡೆಕಾಯಿ ತಿನ್ನಬಹುದೇ?

ಕಿಡ್ನಿಯಲ್ಲಿ ಕಲ್ಲು ಕಂಡುಬಂದಿರುವ ಪ್ರತಿಯೊಬ್ಬರೂ ಬೆಂಡೆಕಾಯಿಯನ್ನು ಸಂಪೂರ್ಣವಾಗಿ ತ್ಯಜಿಸಬೇಕು ಎನ್ನುವುದು ಸರಿಯಲ್ಲ. ವಿಶೇಷವಾಗಿ ಕ್ಯಾಲ್ಸಿಯಂ ಆಕ್ಸಲೇಟ್ ಕಲ್ಲಿನ ಇತಿಹಾಸವಿರುವವರ ಆಹಾರದಲ್ಲಿನ ಆಕ್ಸಲೇಟ್ ಪ್ರಮಾಣವನ್ನು ಅವರ ಆರೋಗ್ಯ ಸ್ಥಿತಿಗೆ ಅನುಗುಣವಾಗಿ ವೈದ್ಯರು ಅಥವಾ ಡಯಟಿಷಿಯನ್ ನಿರ್ಧರಿಸಬಹುದು.

ನೀರಿನ ಸೇವನೆ, ಆಹಾರ ಪದ್ಧತಿ ಹಾಗೂ ಕಲ್ಲಿನ ಪ್ರಕಾರ ಸೇರಿದಂತೆ ಹಲವು ಅಂಶಗಳನ್ನು ಪರಿಗಣಿಸಿ ಆಹಾರದಲ್ಲಿ ಬದಲಾವಣೆ ಮಾಡಲಾಗುತ್ತದೆ.

ಗೌಟ್ ಇರುವವರು ಬೆಂಡೆಕಾಯಿ ತಿನ್ನಬಹುದೇ?

ರಕ್ತದಲ್ಲಿ ಯೂರಿಕ್ ಆಸಿಡ್ ಹೆಚ್ಚಾಗುವ ಗೌಟ್ ಸಮಸ್ಯೆ ಇರುವವರು ಆಹಾರದಲ್ಲಿನ ಪ್ಯೂರಿನ್ ಅಂಶದ ಬಗ್ಗೆ ಸಾಮಾನ್ಯವಾಗಿ ಹೆಚ್ಚು ಗಮನ ಕೊಡುತ್ತಾರೆ. ಆದರೆ ಬೆಂಡೆಕಾಯಿಯಲ್ಲಿರುವ ಆಕ್ಸಲೇಟ್‌ಗಳು ಗೌಟ್ ಸಮಸ್ಯೆಯನ್ನು ಹೆಚ್ಚಿಸುತ್ತವೆ ಎಂಬುದಕ್ಕೆ ಬಲವಾದ ಸಾಕ್ಷ್ಯವಿಲ್ಲ.

ಹೀಗಾಗಿ ಬೆಂಡೆಕಾಯಿ ಸೇವನೆಯಿಂದ ಗೌಟ್ ಹೆಚ್ಚಾಗುತ್ತದೆ ಎಂದು ನೇರವಾಗಿ ಹೇಳಲು ಸಾಧ್ಯವಿಲ್ಲ. ಗೌಟ್ ಇರುವವರು ವೈದ್ಯರು ಸೂಚಿಸಿರುವ ಆಹಾರ ಪದ್ಧತಿ ಹಾಗೂ ಔಷಧಿಗಳನ್ನು ಮುಂದುವರಿಸುವುದು ಮುಖ್ಯ.

IBS ಅಥವಾ ಹೊಟ್ಟೆ ಉಬ್ಬರ ಇರುವವರು ಎಚ್ಚರಿಕೆ ವಹಿಸಿ:

ಬೆಂಡೆಕಾಯಿಯಲ್ಲಿ ಫೈಬರ್ ಇರುವುದರಿಂದ ಸಾಮಾನ್ಯವಾಗಿ ಜೀರ್ಣಕ್ರಿಯೆಗೆ ನೆರವಾಗಬಹುದು. ಆದರೆ ಕೆಲವರಿಗೆ ಹೆಚ್ಚಿನ ಪ್ರಮಾಣದ ಫೈಬರ್ ಸೇವನೆಯಿಂದ ಗ್ಯಾಸ್, ಹೊಟ್ಟೆ ಉಬ್ಬರ ಅಥವಾ ಅಸಹಜತೆ ಉಂಟಾಗಬಹುದು.

IBS ಇರುವವರು ಬೆಂಡೆಕಾಯಿ ಸೇವಿಸಿದ ಬಳಿಕ ತಮ್ಮಲ್ಲಿ ಯಾವುದೇ ಲಕ್ಷಣಗಳು ಹೆಚ್ಚಾಗುತ್ತಿವೆಯೇ ಎಂಬುದನ್ನು ಗಮನಿಸುವುದು ಉತ್ತಮ. ಆಹಾರದ ಪರಿಣಾಮ ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗಬಹುದು.

ರಕ್ತ ತೆಳುವಾಗಿಸುವ ಔಷಧಿ ಸೇವಿಸುವವರು?

ಬೆಂಡೆಕಾಯಿಯಲ್ಲಿ ವಿಟಮಿನ್ ಕೆ ಇದೆ. ಇದು ರಕ್ತ ಹೆಪ್ಪುಗಟ್ಟುವ ಪ್ರಕ್ರಿಯೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ವಾರ್ಫರಿನ್‌ನಂತಹ ಕೆಲವು ರಕ್ತ ತೆಳುವಾಗಿಸುವ ಔಷಧಿಗಳನ್ನು ಸೇವಿಸುವವರು ವಿಟಮಿನ್ ಕೆ ಇರುವ ಆಹಾರವನ್ನು ಏಕಾಏಕಿ ಹೆಚ್ಚು ಅಥವಾ ಕಡಿಮೆ ಮಾಡುವುದರಿಂದ ಔಷಧಿಯ ಪರಿಣಾಮದಲ್ಲಿ ಬದಲಾವಣೆಯಾಗುವ ಸಾಧ್ಯತೆ ಇದೆ.

ಆದ್ದರಿಂದ ಇಂತಹವರು ಬೆಂಡೆಕಾಯಿಯನ್ನು ಸಂಪೂರ್ಣವಾಗಿ ನಿಲ್ಲಿಸುವ ಅಗತ್ಯವಿಲ್ಲ. ಬದಲಾಗಿ ಆಹಾರದಲ್ಲಿ ವಿಟಮಿನ್ ಕೆ ಪ್ರಮಾಣವನ್ನು ಸ್ಥಿರವಾಗಿರಿಸಿಕೊಂಡು ವೈದ್ಯರ ಸಲಹೆ ಪಾಲಿಸುವುದು ಮುಖ್ಯ.

ಬೆಂಡೆಕಾಯಿಯಿಂದ ಅಲರ್ಜಿ ಉಂಟಾಗಬಹುದೇ?

ಯಾವುದೇ ಆಹಾರದಂತೆ ಬೆಂಡೆಕಾಯಿಯಿಂದಲೂ ಕೆಲವರಿಗೆ ಅಲರ್ಜಿ ಉಂಟಾಗುವ ಸಾಧ್ಯತೆ ಇದೆ. ಬೆಂಡೆಕಾಯಿ ಸೇವಿಸಿದ ಬಳಿಕ ಚರ್ಮದಲ್ಲಿ ದದ್ದು, ಕೆಂಪಾಗುವುದು, ತುರಿಕೆ, ತುಟಿ ಅಥವಾ ಮುಖದಲ್ಲಿ ಊತ, ವಾಂತಿ ಅಥವಾ ಹೊಟ್ಟೆಯ ಅಸಹಜತೆ ಕಂಡುಬಂದರೆ ವೈದ್ಯರನ್ನು ಸಂಪರ್ಕಿಸಬೇಕು.

ಮುಖ ಅಥವಾ ಗಂಟಲಿನಲ್ಲಿ ತೀವ್ರ ಊತ, ಉಸಿರಾಟದ ತೊಂದರೆ ಕಂಡುಬಂದರೆ ತಕ್ಷಣ ವೈದ್ಯಕೀಯ ನೆರವು ಪಡೆಯುವುದು ಅಗತ್ಯ.

ಬೆಂಡೆಕಾಯಿ ಎಲ್ಲರೂ ತಪ್ಪಿಸಬೇಕೇ?

ಬೆಂಡೆಕಾಯಿ ಆರೋಗ್ಯಕರ ತರಕಾರಿಯಾಗಿದ್ದು, ಎಲ್ಲರೂ ಅದನ್ನು ತಪ್ಪಿಸಬೇಕು ಎನ್ನುವುದು ಸರಿಯಲ್ಲ. ಆದರೆ ಕಿಡ್ನಿ ಕಲ್ಲು, ಗೌಟ್, IBS ಅಥವಾ ರಕ್ತ ತೆಳುವಾಗಿಸುವ ಔಷಧಿಗಳಂತಹ ನಿರ್ದಿಷ್ಟ ಆರೋಗ್ಯ ಪರಿಸ್ಥಿತಿಗಳಲ್ಲಿ ಆಹಾರದ ಪ್ರಮಾಣವನ್ನು ವೈಯಕ್ತಿಕವಾಗಿ ನಿರ್ಧರಿಸುವ ಅಗತ್ಯವಿರಬಹುದು.

ಹೀಗಾಗಿ ಯಾವುದೇ ತರಕಾರಿಯನ್ನು ಭಯದಿಂದ ಸಂಪೂರ್ಣವಾಗಿ ಆಹಾರದಿಂದ ತೆಗೆದುಹಾಕುವ ಬದಲು, ನಿಮ್ಮ ಆರೋಗ್ಯ ಸ್ಥಿತಿಗೆ ಅನುಗುಣವಾಗಿ ವೈದ್ಯರು ಅಥವಾ ಅರ್ಹ ಡಯಟಿಷಿಯನ್‌ರ ಸಲಹೆ ಪಡೆಯುವುದು ಸೂಕ್ತ.

ಸೂಚನೆ: ಈ ಮಾಹಿತಿ ಸಾಮಾನ್ಯ ಆರೋಗ್ಯ ಜಾಗೃತಿಗಾಗಿ ಮಾತ್ರ. ಯಾವುದೇ ಆರೋಗ್ಯ ಸಮಸ್ಯೆ ಅಥವಾ ಔಷಧಿ ಸೇವನೆಯ ಸಂದರ್ಭದಲ್ಲಿ ವೈಯಕ್ತಿಕ ಆಹಾರ ಸಲಹೆಗಾಗಿ ವೈದ್ಯರು ಅಥವಾ ಅರ್ಹ ಆಹಾರ ತಜ್ಞರನ್ನು ಸಂಪರ್ಕಿಸಿ.

ಗದಗ ಜಿಲ್ಲೆಯ ಅಭಿವೃದ್ಧಿಯೇ ನನ್ನ ಆದ್ಯತೆ: ಜಿ.ಎಸ್. ಪಾಟೀಲ

0

ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಜಿಲ್ಲೆಯ ಜನತೆ ಹಾಗೂ ಮಠ-ಮಾನ್ಯಗಳ ಪೂಜ್ಯರ ಆಶೀರ್ವಾದದಿಂದ ತನಗೆ ಕರ್ನಾಟಕ ವಿಧಾನಸಭಾಧ್ಯಕ್ಷರ ಅತ್ಯುನ್ನತ ಹುದ್ದೆ ದೊರೆತಿದ್ದು, ಈ ಜವಾಬ್ದಾರಿಯನ್ನು ಗದಗ ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಹಾಗೂ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಬಳಸಿಕೊಳ್ಳುವುದಾಗಿ ವಿಧಾನಸಭಾಧ್ಯಕ್ಷ ಜಿ.ಎಸ್. ಪಾಟೀಲ ಹೇಳಿದರು.

ಶಿರಹಟ್ಟಿಯ ಜಗದ್ಗುರು ಫಕೀರೇಶ್ವರ ಮಠಕ್ಕೆ ಆಗಮಿಸಿದ ಅವರು, ಕರ್ತೃ ಶ್ರೀ ಜಗದ್ಗುರು ಫಕೀರೇಶ್ವರರ ಗದ್ದುಗೆಯ ದರ್ಶನ ಪಡೆದು, ಉಭಯ ಶ್ರೀಗಳಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ವಿಧಾನಸಭಾಧ್ಯಕ್ಷರಾಗಿ ಆಯ್ಕೆಯಾದ ಕೂಡಲೇ ಮೊದಲ ಅಧಿವೇಶನವನ್ನು ಯಶಸ್ವಿಯಾಗಿ ನಿರ್ವಹಿಸಿದ್ದೇನೆ. ಈ ಸಂದರ್ಭದಲ್ಲಿ ವಿವಿಧ ಹೋರಾಟಗಳ ಮುಖಂಡರ ಸಮಸ್ಯೆಗಳ ಪರಿಹಾರದ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹಾಗೂ ವಿರೋಧ ಪಕ್ಷಗಳ ಮುಖಂಡರೊಂದಿಗೆ ಚರ್ಚಿಸಿದ್ದೇನೆ ಎಂದು ಹೇಳಿದರು.

ಸದನದಲ್ಲಿ ಜನಪರ ಸಮಸ್ಯೆಗಳ ಕುರಿತು ವಿಸ್ತೃತ ಚರ್ಚೆ ನಡೆಯಬೇಕು. ಆಡಳಿತ ವ್ಯವಸ್ಥೆಯಲ್ಲಿ ಅಗತ್ಯ ಬದಲಾವಣೆ ತರಬೇಕು. ವಿಶೇಷವಾಗಿ ಗಣಕೀಕರಣ ಹಾಗೂ ಕಾಗದರಹಿತ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಬೆಳಗಾವಿಯ ಸುವರ್ಣಸೌಧದಲ್ಲಿ ಉಪಸಮಿತಿಗಳ ಸಭೆಗಳು ಪ್ರತಿತಿಂಗಳು ನಡೆಯುವಂತಾಗಬೇಕು ಎಂಬ ಉದ್ದೇಶವಿದೆ. ಅಲ್ಲದೆ, ಬೆಂಗಳೂರಿನ ಮಾದರಿಯಲ್ಲಿಯೇ ಬೆಳಗಾವಿಯಲ್ಲೂ ಶಾಸಕರ ಭವನ ನಿರ್ಮಿಸುವ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿದ್ದು, ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಹೇಳಿದರು.

ಮಂತ್ರಿ ಆಗಿದ್ದರೆ ಒಂದೇ ಇಲಾಖೆಗೆ ಸೀಮಿತವಾಗುತ್ತಿದ್ದೆ

ಮಂತ್ರಿ ಆಗಿದ್ದರೆ ಕೇವಲ ಒಂದು ಇಲಾಖೆಯ ಜವಾಬ್ದಾರಿಗೆ ಸೀಮಿತವಾಗಬೇಕಾಗುತ್ತಿತ್ತು. ಆದರೆ, ಜನರ ಪ್ರೀತಿ ಮತ್ತು ಬೆಂಬಲದಿಂದ ಇಂದು ವಿಧಾನಸಭಾಧ್ಯಕ್ಷರಂತಹ ಅತ್ಯುನ್ನತ ಹುದ್ದೆ ದೊರೆತಿದೆ. ಈ ಸ್ಥಾನದಲ್ಲಿ ಎಲ್ಲ ಸಚಿವರು ಹಾಗೂ ಸರ್ಕಾರದ ಕಾರ್ಯದರ್ಶಿಗಳೊಂದಿಗೆ ಚರ್ಚಿಸಿ ಜನರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಅವಕಾಶವಿದೆ ಎಂದು ಜಿ.ಎಸ್. ಪಾಟೀಲ ಹೇಳಿದರು.

ಈ ಅಧಿಕಾರವನ್ನು ಜಿಲ್ಲೆಯ ಸರ್ವಾಂಗೀಣ ಪ್ರಗತಿಗೆ ಬಳಸಿಕೊಂಡು, ವಿಧಾನಸಭಾಧ್ಯಕ್ಷರ ಹುದ್ದೆಯ ಗೌರವವನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಅವರು ಭರವಸೆ ನೀಡಿದರು.

ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ ಮಾತನಾಡಿ, ರಾಜ್ಯದಲ್ಲಿಯೇ ಅವಿಭಕ್ತ ಕುಟುಂಬದ ಮೌಲ್ಯಗಳನ್ನು ಕಾಣಬೇಕಾದರೆ ಜಿ.ಎಸ್. ಪಾಟೀಲ ಅವರ ಮನೆತನವನ್ನು ನೋಡಬೇಕು. ಅವರಿಗೆ ಇಂತಹ ಮಹತ್ವದ ಹುದ್ದೆ ಬಹಳ ಹಿಂದೆಯೇ ದೊರೆಯಬೇಕಿತ್ತು. ತಡವಾಗಿಯಾದರೂ ಅವರ ವ್ಯಕ್ತಿತ್ವಕ್ಕೆ ತಕ್ಕಂತಹ ಜವಾಬ್ದಾರಿ ದೊರೆತಿರುವುದು ಗದಗ ಜಿಲ್ಲೆಯ ಜನತೆಯ ಸೌಭಾಗ್ಯವಾಗಿದೆ ಎಂದರು.

ಜಗದ್ಗುರು ಫಕೀರೇಶ್ವರ ದಿಂಗಾಲೇಶ್ವರ ಸ್ವಾಮೀಜಿ ಮಾತನಾಡಿ, ಜಿ.ಎಸ್. ಪಾಟೀಲರ ಮನೆತನ ಭಕ್ತಿ ಮತ್ತು ದಾಸೋಹಕ್ಕೆ ಹೆಸರುವಾಸಿಯಾಗಿದೆ. ಹಾಲಿ ಶಾಸಕರಾಗಿದ್ದಾಗಲೂ, ಮಾಜಿ ಶಾಸಕರಾಗಿದ್ದಾಗಲೂ ಒಂದೇ ರೀತಿಯ ಸರಳ ವ್ಯಕ್ತಿತ್ವವನ್ನು ಉಳಿಸಿಕೊಂಡವರು ಅವರು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ನಾಡಿನ ಪೂಜ್ಯರ ಆಶೀರ್ವಾದ ಜಿ.ಎಸ್. ಪಾಟೀಲರ ಮೇಲಿರಲಿದೆ. ಅವರು ವಿಧಾನಸಭಾಧ್ಯಕ್ಷರಾಗಿ ಸದನವನ್ನು ನಿರ್ವಿವಾದವಾಗಿ ಹಾಗೂ ಸಮರ್ಥವಾಗಿ ಮುನ್ನಡೆಸುತ್ತಾರೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಗದ್ಗುರು ಫಕೀರೇಶ್ವರ ಸಿದ್ದರಾಮ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.

ಮಾಜಿ ಸಂಸದ ಐ.ಜಿ. ಸನದಿ, ಮಾಜಿ ಶಾಸಕ ಜಿ.ಎಸ್. ಗಡ್ಡದೇವರಮಠ, ಡಿ.ಎನ್. ಡಬಾಲಿ, ಹುಮಾಯೂನ್ ಮಾಗಡಿ, ವಿಶ್ವನಾಥ ಕಪ್ಪತ್ತನವರ, ಶಿವಪ್ರಕಾಶ ಮಹಾಜನಶೆಟ್ಟರ, ಗುರನಾಥ ದಾನಪ್ಪನವರ, ಡಿ.ಕೆ. ಹೊನ್ನಪ್ಪನವರ, ಎಲ್.ಡಿ. ಪಾಟೀಲ, ವೀರಣ್ಣ ಅಂಗಡಿ, ಸಿ.ಸಿ. ನೂರಶೆಟ್ಟರ, ಡಾ. ಎಸ್.ಎಂ. ಬುರಬುರೆ, ಪರಮೇಶ ಪರಬ, ಹೊನ್ನಪ್ಪ ಶಿರಹಟ್ಟಿ, ಡಾ. ವಿಜಯದತ್ತ ಮಂಗಸೂಳಿ, ಮಹಾಂತೇಶ ದಶಮನಿ, ವೀರಯ್ಯ ಮಠಪತಿ, ಚಾಂದಸಾಬ ಮುಳಗುಂದ, ಬುಡನಶ್ಯಾ ಮಕಾನದಾರ, ತಹಶೀಲ್ದಾರ ಕೆ. ರಾಘವೇಂದ್ರ ರಾವ್, ಪಿಎಸ್‌ಐ ಈರಪ್ಪ ರಿತ್ತಿ, ಮುಖ್ಯಾಧಿಕಾರಿ ಎನ್.ಎಂ. ಹಾದಿಮನಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಜನತೆಯ ಪ್ರೀತಿ, ವಿಶ್ವಾಸ ಮತ್ತು ಪೂಜ್ಯರ ಆಶೀರ್ವಾದದಿಂದ ವಿಧಾನಸಭಾಧ್ಯಕ್ಷರಂತಹ ಅತ್ಯುನ್ನತ ಜವಾಬ್ದಾರಿ ದೊರೆತಿದೆ. ಈ ಹುದ್ದೆಯನ್ನು ಕೇವಲ ಸ್ಥಾನಮಾನಕ್ಕಾಗಿ ಬಳಸದೆ, ಗದಗ ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಹಾಗೂ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಬಳಸಿಕೊಳ್ಳುತ್ತೇನೆ.

– ಜಿ.ಎಸ್. ಪಾಟೀಲ, ವಿಧಾನಸಭಾಧ್ಯಕ್ಷರು

ಜಾತಿಯ ಸಂಕೋಲೆ ಮುರಿದು ಸಮಾನತೆಯ ಬೆಳಕು ಚೆಲ್ಲಿದ ನಾರಾಯಣಗುರು: ಸಿ.ಎನ್. ಶ್ರೀಧರ್

0

ವಿಜಯಸಾಕ್ಷಿ ಸುದ್ದಿ, ಗದಗ: ಜಾತಿ, ಧರ್ಮ, ಮೇಲು-ಕೀಳು ಎಂಬ ಭೇದಭಾವಗಳಿಂದ ಸಮಾಜವನ್ನು ಮುಕ್ತಗೊಳಿಸಿ, ಸಮಾನತೆ ಮತ್ತು ಮಾನವೀಯತೆಯ ಹಾದಿಯಲ್ಲಿ ಮುನ್ನಡೆಸಿದ ಬ್ರಹ್ಮಶ್ರೀ ನಾರಾಯಣಗುರುಗಳ ಚಿಂತನೆಗಳು ಇಂದಿಗೂ ಸಮಾಜಕ್ಕೆ ದಾರಿದೀಪವಾಗಿವೆ ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಹೇಳಿದರು.

ಸಮಾಜದಲ್ಲಿ ಬೇರೂರಿದ್ದ ಅಸ್ಪೃಶ್ಯತೆ ಹಾಗೂ ಜಾತಿ ತಾರತಮ್ಯದ ವಿರುದ್ಧ ಹೋರಾಟ ನಡೆಸಿದ ನಾರಾಯಣಗುರುಗಳು, ಪ್ರತಿಯೊಬ್ಬ ಮನುಷ್ಯನಿಗೂ ಸಮಾನ ಹಕ್ಕು ಮತ್ತು ಗೌರವ ದೊರೆಯಬೇಕು ಎಂಬ ಸಂದೇಶವನ್ನು ತಮ್ಮ ಬದುಕಿನ ಮೂಲಕವೇ ಸಾರಿದರು ಎಂದು ಹೇಳಿದರು.

ನಗರದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಜಿಲ್ಲಾಡಳಿತ ಭವನದ ಅಡಿಟೋರಿಯಂ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ–2026 ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಬ್ರಿಟಿಷರ ಆಡಳಿತದ ಕಾಲದಲ್ಲಿ ಕೇರಳ ಹಾಗೂ ದಕ್ಷಿಣ ಕನ್ನಡ ಭಾಗಗಳಲ್ಲಿ ಅಸ್ಪೃಶ್ಯತೆ ಮತ್ತು ಜಾತಿ ತಾರತಮ್ಯ ತೀವ್ರವಾಗಿತ್ತು. ಸಮಾಜದಲ್ಲಿ ಕೆಲ ವರ್ಗಗಳಿಗೆ ಮಾತ್ರ ಧಾರ್ಮಿಕ ಹಾಗೂ ಸಾಮಾಜಿಕ ಹಕ್ಕುಗಳು ಸೀಮಿತವಾಗಿದ್ದ ಸಂದರ್ಭದಲ್ಲಿ, ನಾರಾಯಣಗುರುಗಳು ಆ ಅನ್ಯಾಯದ ವಿರುದ್ಧ ಧ್ವನಿ ಎತ್ತಿದರು ಎಂದು ತಿಳಿಸಿದರು.

ಸಾಮಾಜಿಕ ಕಟ್ಟುಪಾಡುಗಳನ್ನು ಪ್ರಶ್ನಿಸಿದ ಅವರು, ಎಲ್ಲರೂ ಸಮಾನರು ಎಂಬ ತತ್ವವನ್ನು ಪ್ರತಿಪಾದಿಸಿದರು. ಕೆಳವರ್ಗದ ಜನರಿಗೂ ಧಾರ್ಮಿಕ ಹಕ್ಕು ದೊರೆಯಬೇಕು ಎಂಬ ಉದ್ದೇಶದಿಂದ ದೇವಾಲಯಗಳನ್ನು ನಿರ್ಮಿಸಿ, ಸಮಾಜದಲ್ಲಿ ಸಮಾನತೆಯ ಹೊಸ ಚಿಂತನೆಗೆ ನಾಂದಿ ಹಾಡಿದರು ಎಂದು ಹೇಳಿದರು.

ಹುಟ್ಟುವಾಗ ಯಾರಿಗೂ ಜಾತಿಯಿಲ್ಲ

‘ಹುಟ್ಟುವಾಗ ಯಾರಿಗೂ ಜಾತಿ ಇರುವುದಿಲ್ಲ, ಸಮಾಜವೇ ಜಾತಿಯನ್ನು ಸೃಷ್ಟಿಸುತ್ತದೆ. ಎಲ್ಲರ ರಕ್ತದ ಬಣ್ಣವೂ ಒಂದೇ’ ಎಂಬ ನಾರಾಯಣಗುರುಗಳ ಚಿಂತನೆ ಇಂದಿನ ಸಮಾಜಕ್ಕೂ ಅತ್ಯಂತ ಪ್ರಸ್ತುತವಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.

ಮಗು ಹುಟ್ಟುವಾಗ ಅದರ ಮನಸ್ಸು ಶುದ್ಧವಾಗಿರುತ್ತದೆ. ಬೆಳೆಯುತ್ತಾ ಹೋದಂತೆ ಸಮಾಜದ ಕಟ್ಟುಪಾಡುಗಳು, ಜಾತಿ ಮತ್ತು ತಾರತಮ್ಯದ ಕಲ್ಪನೆಗಳು ಅದರ ಮೇಲೆ ಪರಿಣಾಮ ಬೀರುತ್ತವೆ. ಇಂತಹ ಅಸಮಾನತೆಯ ಮನೋಭಾವದಿಂದ ಹೊರಬಂದು ಮನುಷ್ಯತ್ವದಿಂದ ಬದುಕಲು ಮಹಾನ್ ದಾರ್ಶನಿಕರ ವಿಚಾರಧಾರೆಗಳು ಪ್ರೇರಣೆ ನೀಡುತ್ತವೆ ಎಂದರು.

ನಾರಾಯಣಗುರುಗಳ ಜಯಂತಿಯನ್ನು ಕೇವಲ ಆಚರಣೆಗೆ ಸೀಮಿತಗೊಳಿಸದೆ, ಅವರ ಸಮಾನತೆ, ಸಹೋದರತೆ ಹಾಗೂ ಮಾನವೀಯತೆಯ ಸಂದೇಶಗಳನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಅಸಮಾನತೆಯ ವಿರುದ್ಧ ಅಹಿಂಸೆಯ ಹೋರಾಟ

ಉಪನ್ಯಾಸಕ ಡಾ. ದತ್ತಪ್ರಸನ್ನ ಪಾಟೀಲ ಮಾತನಾಡಿ, ಅಸ್ಪೃಶ್ಯತೆ ಮತ್ತು ಸಾಮಾಜಿಕ ತಾರತಮ್ಯದ ವಿರುದ್ಧ ನಾರಾಯಣಗುರುಗಳು ಅಹಿಂಸಾತ್ಮಕ ಹೋರಾಟ ನಡೆಸುವ ಮೂಲಕ ಸಾಮಾಜಿಕ ಹಾಗೂ ಶೈಕ್ಷಣಿಕ ಕ್ರಾಂತಿಗೆ ಮುನ್ನುಡಿ ಬರೆದರು ಎಂದು ಹೇಳಿದರು.

‘ಒಂದೇ ಜಾತಿ, ಒಂದೇ ಧರ್ಮ, ಒಂದೇ ದೇವರು’ ಎಂಬ ಅವರ ಧ್ಯೇಯವಾಕ್ಯ ಕೇವಲ ಘೋಷಣೆಯಾಗಿರದೆ, ಸಮಾನತೆಯ ಸಮಾಜ ನಿರ್ಮಾಣದ ಮಹತ್ತರ ಸಂದೇಶವಾಗಿದೆ ಎಂದರು.

ಕೇರಳದ ಅರುವಿಪುರಂನಲ್ಲಿ ನೆಯ್ಯಾರ್ ನದಿಯಿಂದ ಶಿಲೆಯೊಂದನ್ನು ತಂದು ಶಿವಲಿಂಗ ಪ್ರತಿಷ್ಠಾಪಿಸುವ ಮೂಲಕ ಧಾರ್ಮಿಕ ಆಚರಣೆಗಳ ಮೇಲಿನ ಕೆಲವರ ಏಕಸ್ವಾಮ್ಯವನ್ನು ಪ್ರಶ್ನಿಸಿದರು. ಕೆಳ ಸಮುದಾಯದವರಿಗೂ ಪೂಜಾ ಹಕ್ಕು ದೊರೆಯಬೇಕು ಎಂಬ ಆಶಯದೊಂದಿಗೆ ಅವರು ಸಾಮಾಜಿಕ ಬದಲಾವಣೆಗೆ ನಾಂದಿ ಹಾಡಿದರು ಎಂದು ವಿವರಿಸಿದರು.

ದೇವಸ್ಥಾನಗಳಲ್ಲಿ ಕನ್ನಡಿಗಳನ್ನು ಪ್ರತಿಷ್ಠಾಪಿಸುವ ಮೂಲಕ ದೇವರು ಪ್ರತಿಯೊಬ್ಬರಲ್ಲಿಯೂ ಇದ್ದಾನೆ ಎಂಬ ಅದ್ವೈತ ತತ್ವವನ್ನು ಜನಸಾಮಾನ್ಯರಿಗೆ ಸರಳವಾಗಿ ತಿಳಿಸಿಕೊಟ್ಟರು ಎಂದರು.

ತಳ ಸಮುದಾಯದವರು ಶೈಕ್ಷಣಿಕವಾಗಿ ಮುಂದೆ ಬರಬೇಕು ಎಂಬ ಉದ್ದೇಶದಿಂದ ಶ್ರೀ ನಾರಾಯಣ ಗುರು ಧರ್ಮ ಪರಿಪಾಲನಾ ಯೋಗಂ ಸಂಸ್ಥೆಯನ್ನು ಸ್ಥಾಪಿಸಿ ಶಿಕ್ಷಣ ಕ್ಷೇತ್ರಕ್ಕೆ ಉತ್ತೇಜನ ನೀಡಿದರು. ಬಾಲ್ಯ ವಿವಾಹ ಹಾಗೂ ಮಹಿಳೆಯರ ಮೇಲಿನ ದೌರ್ಜನ್ಯವನ್ನು ವಿರೋಧಿಸಿದ ಅವರು, ಸರಳ ವಿವಾಹ ಪದ್ಧತಿಗೆ ಒತ್ತು ನೀಡಿದರು ಎಂದು ಹೇಳಿದರು.

ಸಾರ್ವಜನಿಕ ರಸ್ತೆಗಳಲ್ಲಿ ಸಂಚರಿಸುವ ಹಾಗೂ ದೇವಸ್ಥಾನ ಪ್ರವೇಶಿಸುವ ಹಕ್ಕಿನಿಂದ ವಂಚಿತರಾಗಿದ್ದ ಅಸ್ಪೃಶ್ಯರ ಪರವಾಗಿ ನಡೆದ ವೈಕಂ ಸತ್ಯಾಗ್ರಹ ಸೇರಿದಂತೆ ಸಾಮಾಜಿಕ ಸಮಾನತೆಗಾಗಿ ನಡೆದ ಹೋರಾಟಗಳಿಗೆ ನಾರಾಯಣಗುರುಗಳು ಬೆಂಬಲ ನೀಡಿದ್ದರು. ದಲಿತರು ಹಾಗೂ ಹಿಂದುಳಿದ ವರ್ಗಗಳಿಗೆ ಸಮಾನ ಹಕ್ಕು ದೊರಕಿಸಿಕೊಡುವಲ್ಲಿ ಅವರ ಕೊಡುಗೆ ಅನನ್ಯವಾಗಿದೆ ಎಂದು ತಿಳಿಸಿದರು.

ವಿದ್ಯಾರ್ಥಿಗಳು, ಕ್ರೀಡಾಪಟುಗಳಿಗೆ ಸನ್ಮಾನ

ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳು ಹಾಗೂ ವಿವಿಧ ಕ್ರೀಡಾಕೂಟಗಳಲ್ಲಿ ವಿಜೇತರಾದ ಕ್ರೀಡಾಪಟುಗಳನ್ನು ಸನ್ಮಾನಿಸಲಾಯಿತು.

ಅಪರ ಜಿಲ್ಲಾಧಿಕಾರಿ ಡಾ. ದುರ್ಗೇಶ್ ಕೆ.ಆರ್., ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ್ ಬಬರ್ಚಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಸವರಾಜ ವಿ. ಬಳ್ಳಾರಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಡಾ. ನಂದಾ ಹಣ್ಣಬರಟ್ಟಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಮಾಜದ ಮುಖಂಡರು ಉಪಸ್ಥಿತರಿದ್ದರು.

ಬಾಹುಬಲಿ ಜೈನ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ಸಮಾಜದಲ್ಲಿ ಜಾತಿ, ಧರ್ಮ ಹಾಗೂ ಮೇಲು-ಕೀಳು ಎಂಬ ಭೇದಭಾವಗಳಿಗೆ ಅವಕಾಶವಿಲ್ಲ. ಪ್ರತಿಯೊಬ್ಬ ಮನುಷ್ಯನನ್ನೂ ಸಮಾನವಾಗಿ ಕಾಣುವ ಮಾನವೀಯತೆಯ ಸಂದೇಶವನ್ನು ನಾರಾಯಣಗುರುಗಳು ನೀಡಿದ್ದಾರೆ. ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ನಿಜವಾದ ಸಮಾನತೆಯ ಸಮಾಜ ನಿರ್ಮಾಣ ಸಾಧ್ಯ.

– ಸಿ.ಎನ್. ಶ್ರೀಧರ್, ಜಿಲ್ಲಾಧಿಕಾರಿ

ಲಕ್ಷ್ಮೇಶ್ವರದಲ್ಲಿ ಮೊಳಗಿದ ಮಂಚರಿಗಾಥಾ ಭಜನೆ

0

ವಿಜಯಸಾಕ್ಷಿ ಸುದ್ದಿ, ಲಕ್ಷ್ಮೇಶ್ವರ: ಪಟ್ಟಣದ ಶ್ರೀ ಪಾಂಡುರಂಗ ದೇವಸ್ಥಾನದಲ್ಲಿ ನಡೆಯುತ್ತಿರುವ ಶ್ರಾವಣ ಮಾಸದ ಶ್ರೀ ಜ್ಞಾನೇಶ್ವರಿ ಪಾರಾಯಣದ ರಜತ ಮಹೋತ್ಸವ ಹಾಗೂ ಶ್ರೀ ಪಾಂಡುರಂಗ–ರಕುಮಾಯಿ ನೂತನ ಮೂರ್ತಿಗಳ ಪ್ರತಿಷ್ಠಾಪನಾ ಮಹೋತ್ಸವದ ಅಂಗವಾಗಿ ನಡೆಯುತ್ತಿರುವ ಅಪರೂಪದ ಮಂಚರಿಗಾಥಾ ಭಜನೆ ಸಾವಿರಾರು ಭಕ್ತರನ್ನು ತನ್ನತ್ತ ಸೆಳೆಯುತ್ತಿದೆ.

ಕಳೆದ ಮಂಗಳವಾರದಿಂದ ಆರಂಭವಾಗಿರುವ ಐದು ದಿನಗಳ ಧಾರ್ಮಿಕ ಕಾರ್ಯಕ್ರಮಗಳು ಶನಿವಾರ ಸಮಾರೋಪಗೊಳ್ಳಲಿದ್ದು, ಪ್ರತಿಷ್ಠಾಪನಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿ ಮಂಚರಿಗಾಥಾ ಭಜನೆ ಗಮನ ಸೆಳೆಯುತ್ತಿದೆ.

ಮಂಗಳವಾರದಿಂದ ನೂರಾರು ಸಮಾಜ ಬಾಂಧವರು ಮುಂಜಾನೆ ಹಾಗೂ ಸಂಜೆ ಮಂಚರಿಗಾಥಾ ಭಜನೆಯಲ್ಲಿ ತೊಡಗಿಕೊಂಡಿದ್ದಾರೆ. ಈ ವಿನೂತನ ಹಾಗೂ ವೈಶಿಷ್ಟ್ಯಪೂರ್ಣ ಭಜನೆಯ ಧ್ವನಿ ಪಟ್ಟಣದ ವಿವಿಧ ಭಾಗಗಳಲ್ಲಿ ಪ್ರತಿಧ್ವನಿಸುತ್ತಿದ್ದು, ಭಜನೆ ಆಲಿಸಲು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ.

ಕರ್ನಾಟಕದಲ್ಲಿ ಭಾವಸಾರ ಕ್ಷತ್ರೀಯ ಸಮಾಜದ ವತಿಯಿಂದ ಮಂಚರಿಗಾಥಾ ಭಜನೆ ಆಯೋಜಿಸುತ್ತಿರುವುದು ಇದೇ ಮೊದಲ ಬಾರಿಗೆ ಎನ್ನಲಾಗುತ್ತಿದ್ದು, ಸಮಾಜ ಬಾಂಧವರು ಅತ್ಯಂತ ಉತ್ಸಾಹ ಮತ್ತು ಭಕ್ತಿಭಾವದಿಂದ ಪಾಲ್ಗೊಳ್ಳುತ್ತಿದ್ದಾರೆ.

ಸುಮಾರು 537 ಅಭಂಗಗಳನ್ನು ಒಳಗೊಂಡಿರುವ ಮಂಚರಿಗಾಥಾ, ಸದ್ಗುರು ತುಕಾರಾಮ ಮಹಾರಾಜರು ಕೈಬರಹದಲ್ಲಿ ರಚಿಸಿರುವ ಅಮೂಲ್ಯ ಗ್ರಂಥವೆಂದು ತಿಳಿದುಬಂದಿದೆ. ಈ ಗ್ರಂಥಕ್ಕೆ ವಿಶೇಷ ಧಾರ್ಮಿಕ ಹಿನ್ನೆಲೆಯಿದ್ದು, ಭಕ್ತಿಭಾವದಿಂದ ಇದರ ಪಾರಾಯಣ ಹಾಗೂ ಭಜನೆ ಮಾಡುವುದರಿಂದ ಪುಣ್ಯ ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆ ಭಕ್ತರಲ್ಲಿದೆ.

ಭಕ್ತರ ಇಷ್ಟಾರ್ಥಗಳನ್ನು ಈಡೇರಿಸುವ ನಿಟ್ಟಿನಲ್ಲಿ ಮಂಚರಿಗಾಥಾವನ್ನು ಭಕ್ತಿಯಿಂದ ಅನುಷ್ಠಾನ ಮಾಡಿ ಭಜಿಸಿದರೆ ವಿಶೇಷ ಫಲ ದೊರೆಯುತ್ತದೆ ಎಂಬ ಧಾರ್ಮಿಕ ನಂಬಿಕೆಯೂ ಇದೆ. ವಾಶಿ ಕ್ಷೇತ್ರದಲ್ಲಿ ವಾಸಕರ ಮಹಾರಾಜರ ಮನೆಯಲ್ಲಿ ಈ ಅಪರೂಪದ ಗ್ರಂಥ ಇಂದಿಗೂ ಸಂರಕ್ಷಿಸಲ್ಪಟ್ಟಿದೆ ಎಂದು ಹೇಳಲಾಗುತ್ತಿದೆ.

ಲಕ್ಷ್ಮೇಶ್ವರದಲ್ಲಿ ಮಂಚರಿಗಾಥಾ ಭಜನೆ ಆಚರಿಸಲಾಗುತ್ತಿರುವುದು ಕರ್ನಾಟಕದಲ್ಲಿಯೇ ಪ್ರಥಮ ಎಂಬುದು ವಿಶೇಷವಾಗಿದೆ.

ಕಳೆದ ನಾಲ್ಕು ದಿನಗಳಿಂದ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ವಿಧಿವಿಧಾನಗಳು ಶಾಸ್ತ್ರೋಕ್ತವಾಗಿ ನಡೆಯುತ್ತಿದ್ದು, ಇದರೊಂದಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೂ ಯಶಸ್ವಿಯಾಗಿ ನಡೆಯುತ್ತಿವೆ.

ಐದು ದಿನಗಳ ಕಾರ್ಯಕ್ರಮ ಶನಿವಾರ ಮುಕ್ತಾಯಗೊಳ್ಳಲಿದ್ದು, ಮಧ್ಯಾಹ್ನ 12.30ಕ್ಕೆ ದೇವಸ್ಥಾನದ ಆವರಣದಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ.

ಕೊಲ್ಲಾಪುರದ ವಾರಕರಿ ರತ್ನ ಹ.ಭ.ಪ. ತುಕಾರಾಮ ಪವಾರ ಸಾನ್ನಿಧ್ಯ ವಹಿಸಲಿದ್ದು, ಶಾಸಕ ಡಾ. ಚಂದ್ರು ಲಮಾಣಿ, ಮಾಜಿ ಶಾಸಕರಾದ ಜಿ.ಎಂ. ಮಹಾಂತಶೆಟ್ಟರ, ಜಿ.ಎಸ್. ಗಡ್ಡದೇವರಮಠ, ರಾಮಣ್ಣ ಲಮಾಣಿ ಹಾಗೂ ರಾಮಕೃಷ್ಣ ದೊಡ್ಡಮನಿ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ದಾಖಲೆ ನೀಡಿ ಜಾಬ್ ಕಾರ್ಡ್ ಪಡೆಯಿರಿ: ಕುಮಾರ ಪುಜಾರ

0

ವಿಜಯಸಾಕ್ಷಿ ಸುದ್ದಿ, ಗದಗ: ವಿಬಿಜಿ ರಾಮ್‌ಜಿ ಯೋಜನೆಯಡಿ ಇನ್ನೂ ನೋಂದಣಿಯಾಗದ ಕೂಲಿಕಾರರು ಅಗತ್ಯ ದಾಖಲೆಗಳೊಂದಿಗೆ ತಮ್ಮ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಹೊಸ ಜಾಬ್ ಕಾರ್ಡ್ ಪಡೆದುಕೊಳ್ಳಬೇಕು ಎಂದು ತಾಲೂಕು ಪಂಚಾಯಿತಿ ನಿರ್ದೇಶಕ (ವಿಬಿಜಿ ರಾಮ್‌ಜಿ) ಕುಮಾರ ಪುಜಾರ ಕರೆ ನೀಡಿದರು.

ತಾಲೂಕಿನ ಲಕ್ಕುಂಡಿ ಗ್ರಾಮದ ದಂಡಿನ ದುರ್ಗಾದೇವಿ ಕೆರೆಯಿಂದ ಮೊಟ ಬಸಪ್ಪ ಗುಡಿಯವರೆಗೆ ನೀರು ಹರಿಯುವ ಕೋಡಿ ಅಭಿವೃದ್ಧಿ ಕಾಮಗಾರಿಯ ಸ್ಥಳಕ್ಕೆ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ‘ವಿಕಸಿತ ಭಾರತ–ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಆಜೀವಿಕ ಮಿಷನ್ (ಗ್ರಾಮೀಣ)’ ಕಾಯ್ದೆಯ ಐಇಸಿ ಚಟುವಟಿಕೆಯಡಿ ಹಮ್ಮಿಕೊಂಡಿದ್ದ ಜಾಬ್ ಕಾರ್ಡ್ ಮೇಳದ ಅಂಗವಾಗಿ ನಡೆದ ಸಭೆಯಲ್ಲಿ ಮಾತನಾಡಿದರು.

ವಿಬಿಜಿ ರಾಮ್‌ಜಿ ಯೋಜನೆಯಡಿ ಗ್ರಾಮೀಣ ಜನರು ಹೆಚ್ಚಿನ ಸಂಖ್ಯೆಯಲ್ಲಿ ಕೆಲಸಕ್ಕೆ ಹಾಜರಾಗಬೇಕು. ಜೊತೆಗೆ ಯೋಜನೆಯಡಿ ಲಭ್ಯವಿರುವ ವೈಯಕ್ತಿಕ ಕಾಮಗಾರಿಗಳ ಸೌಲಭ್ಯವನ್ನೂ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಗ್ರಾಮೀಣ ಕೂಲಿಕಾರರಿಗೆ ಆದ್ಯತೆಯ ಮೇರೆಗೆ ಶೇ.100ರಷ್ಟು ಉದ್ಯೋಗ ಒದಗಿಸುವ ಉದ್ದೇಶದಿಂದ ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಹಂತದಲ್ಲಿ ಕ್ರಿಯಾ ಯೋಜನೆಗಳನ್ನು ರೂಪಿಸಲಾಗಿದೆ ಎಂದು ಕುಮಾರ ಪುಜಾರ ಹೇಳಿದರು.

ಜಾಬ್ ಕಾರ್ಡ್ ಮೇಳದ ಮೂಲಕ ಈಗಾಗಲೇ ಪಂಚಾಯಿತಿ ವ್ಯಾಪ್ತಿಯಲ್ಲಿ ಸಾಕಷ್ಟು ಜನರು ಹೊಸ ಜಾಬ್ ಕಾರ್ಡ್‌ಗಾಗಿ ನೋಂದಣಿ ಮಾಡಿಕೊಂಡಿದ್ದಾರೆ. ಕೆಲ ಕುಟುಂಬಗಳಲ್ಲಿ ಕುಟುಂಬ ವಿಭಜನೆ ಸೇರಿದಂತೆ ವಿವಿಧ ತಾಂತ್ರಿಕ ಸಮಸ್ಯೆಗಳು ಹಾಗೂ ಕುಂದುಕೊರತೆಗಳಿದ್ದು, ಅವುಗಳಿಗೆ ಹಂತ ಹಂತವಾಗಿ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಮೀರ್ ನಾಯಕ ಮಾತನಾಡಿ, ಜಾಬ್ ಕಾರ್ಡ್ ಹೊಂದಿರುವ ಪ್ರತಿಯೊಂದು ಗ್ರಾಮೀಣ ಕುಟುಂಬವು ವರ್ಷದಲ್ಲಿ 125 ದಿನಗಳ ಉದ್ಯೋಗ ಪಡೆಯುವ ಕಾನೂನುಬದ್ಧ ಹಕ್ಕನ್ನು ಹೊಂದಿದೆ ಎಂದು ತಿಳಿಸಿದರು.

ಉದ್ಯೋಗಕ್ಕಾಗಿ ದೂರದ ಊರುಗಳಿಗೆ ವಲಸೆ ಹೋಗಿ ಕಷ್ಟ-ನಷ್ಟ ಅನುಭವಿಸುವ ಅಗತ್ಯವಿಲ್ಲ. ತಮ್ಮ ಸ್ವಂತ ಗ್ರಾಮದಲ್ಲಿಯೇ ವಿಬಿಜಿ ರಾಮ್‌ಜಿ ಯೋಜನೆಯಡಿ ನಡೆಯುವ ಕಾಮಗಾರಿಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಆರ್ಥಿಕ ಸ್ವಾವಲಂಬನೆ ಸಾಧಿಸಬೇಕು ಎಂದು ಸಲಹೆ ನೀಡಿದರು.

ತಾಲೂಕು ಪಂಚಾಯಿತಿಯ ಐಇಸಿ ಸಂಯೋಜಕ ವೀರೇಶ ಬಸನಗೌಡ್ರ, ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ವಿಬಿಜಿ ರಾಮ್‌ಜಿ ಯೋಜನೆಯಡಿ ಇನ್ನೂ ನೋಂದಣಿಯಾಗದ ಕೂಲಿಕಾರರು ಅಗತ್ಯ ದಾಖಲೆಗಳನ್ನು ಗ್ರಾಮ ಪಂಚಾಯಿತಿಗೆ ಸಲ್ಲಿಸಿ ಜಾಬ್ ಕಾರ್ಡ್ ಪಡೆದುಕೊಳ್ಳಬೇಕು. ಉದ್ಯೋಗದ ಹಕ್ಕನ್ನು ಬಳಸಿಕೊಂಡು ತಮ್ಮ ಊರಿನಲ್ಲಿಯೇ ಕೆಲಸ ಮಾಡಿ ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು.

– ಕುಮಾರ ಪುಜಾರ, ತಾಪಂ ನಿರ್ದೇಶಕ (ವಿಬಿಜಿ ರಾಮ್‌ಜಿ)

ಎಲ್ಲಾ ತಾಲೂಕುಗಳ ಬರ ಘೋಷಣೆಗೆ ರಾಜು ಕುರುಡಗಿ ಆಗ್ರಹ

0

ವಿಜಯಸಾಕ್ಷಿ ಸುದ್ದಿ, ಗದಗ: ಮಳೆ ಕೈಕೊಟ್ಟು ಮುಂಗಾರು ಬೆಳೆಗಳು ಹಾನಿಗೊಂಡು ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಗದಗ ಜಿಲ್ಲೆಯ ಎಲ್ಲ ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಬಿಜೆಪಿ ಗದಗ ಜಿಲ್ಲಾ ಘಟಕದ ಅಧ್ಯಕ್ಷ ತೋಟಪ್ಪ (ರಾಜು) ಕುರುಡಗಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಈ ಕುರಿತು ಶುಕ್ರವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಜಿಲ್ಲೆಯಲ್ಲಿ ಹೆಸರು, ಗೋವಿನಜೋಳ, ಹತ್ತಿ, ಈರುಳ್ಳಿ, ಸೋಯಾಬಿನ್, ಉದ್ದು ಹಾಗೂ ಶೇಂಗಾ ಸೇರಿದಂತೆ ವಿವಿಧ ಬೆಳೆಗಳನ್ನು ರೈತರು ಬಿತ್ತನೆ ಮಾಡಿದ್ದರು. ಆದರೆ ನಿರೀಕ್ಷಿತ ಮಳೆಯಾಗದೆ ಬಹುತೇಕ ಬೆಳೆಗಳು ಹಾನಿಗೊಳಗಾಗಿವೆ ಎಂದು ತಿಳಿಸಿದ್ದಾರೆ.

ಪ್ರತಿ ಎಕರೆಗೆ ಬಿತ್ತನೆ ಬೀಜ, ರಸಗೊಬ್ಬರ, ಕೀಟನಾಶಕ ಹಾಗೂ ಕೂಲಿಗಾಗಿ ರೈತರು ₹15 ಸಾವಿರದಿಂದ ₹25 ಸಾವಿರದವರೆಗೆ ವೆಚ್ಚ ಮಾಡಿದ್ದಾರೆ. ಇದೀಗ ಬೆಳೆ ಕೈಕೊಟ್ಟಿರುವುದರಿಂದ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಹೇಳಿದ್ದಾರೆ.

ಗದಗ, ಶಿರಹಟ್ಟಿ, ಮುಂಡರಗಿ, ಲಕ್ಷ್ಮೇಶ್ವರ, ರೋಣ, ಗಜೇಂದ್ರಗಡ ಹಾಗೂ ನರಗುಂದ ತಾಲೂಕುಗಳ ಹಲವು ಪ್ರದೇಶಗಳಲ್ಲಿ ಬೆಳೆ ಹಾನಿ ತೀವ್ರವಾಗಿದೆ. ಕೃಷಿ ಹಾಗೂ ತೋಟಗಾರಿಕೆ ಇಲಾಖೆಗಳ ಜಂಟಿ ಸಮೀಕ್ಷೆಯಲ್ಲಿ ಜಿಲ್ಲಾದ್ಯಂತ ₹218 ಕೋಟಿಗೂ ಅಧಿಕ ಬೆಳೆ ನಷ್ಟ ದಾಖಲಾಗಿದೆ ಎಂದು ತಿಳಿಸಿದ್ದಾರೆ.

ಬೆಳೆ ನಷ್ಟದಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಜಿಲ್ಲೆಯ ಯಾವುದೇ ತಾಲೂಕನ್ನು ಕಡೆಗಣಿಸದೆ ಎಲ್ಲ ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ ರೈತರಿಗೆ ತಕ್ಷಣವೇ ಪರಿಹಾರ ನೀಡಬೇಕು.

– ತೋಟಪ್ಪ (ರಾಜು) ಕುರುಡಗಿ, ಬಿಜೆಪಿ ಗದಗ ಜಿಲ್ಲಾ ಘಟಕದ ಅಧ್ಯಕ್ಷ

ಸಭಾಧ್ಯಕ್ಷ ಸ್ಥಾನ ಕ್ಷೇತ್ರದ ಸೇವೆಗೆ ಅಡ್ಡಿಯಾಗದು: ಜಿ.ಎಸ್. ಪಾಟೀಲ

0

ವಿಜಯಸಾಕ್ಷಿ ಸುದ್ದಿ, ಡಂಬಳ: ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಬಳಿಕ ಇದೇ ಮೊದಲ ಬಾರಿಗೆ ತಮ್ಮ ಸ್ವಕ್ಷೇತ್ರವಾದ ರೋಣ ವಿಧಾನಸಭಾ ಕ್ಷೇತ್ರದ ಮುಂಡರಗಿ ತಾಲೂಕಿನ ಡಂಬಳ ಹೋಬಳಿಗೆ ಆಗಮಿಸಿದ ವಿಧಾನಸಭಾಧ್ಯಕ್ಷ ಜಿ.ಎಸ್. ಪಾಟೀಲ ಅವರಿಗೆ ಕದಾಂಪುರ ಗ್ರಾಮದಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಭವ್ಯ ಸ್ವಾಗತ ಕೋರಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿ.ಎಸ್. ಪಾಟೀಲ, ಸಭಾಧ್ಯಕ್ಷ ಸ್ಥಾನದ ಜವಾಬ್ದಾರಿ ದೊರೆತಿದ್ದರೂ ರೋಣ ವಿಧಾನಸಭಾ ಕ್ಷೇತ್ರದ ಜನರ ಸೇವೆಯಲ್ಲಿ ಯಾವುದೇ ಕೊರತೆಯಾಗುವುದಿಲ್ಲ ಎಂದು ಭರವಸೆ ನೀಡಿದರು.

ನಾನು ಸಭಾಧ್ಯಕ್ಷನಾಗಿದ್ದರೂ ಕ್ಷೇತ್ರದ ಜನರೊಂದಿಗೆ ಹಾಗೂ ಕಾರ್ಯಕರ್ತರೊಂದಿಗೆ ನನ್ನ ನಿಕಟ ಸಂಪರ್ಕ ನಿರಂತರವಾಗಿರಲಿದೆ. ಸಭಾಧ್ಯಕ್ಷ ಸ್ಥಾನ ಕ್ಷೇತ್ರದ ಜನರ ಸೇವೆಗೆ ಅಡ್ಡಿಯಾಗುವುದಿಲ್ಲ. ಅದೇ ರೀತಿ, ನನ್ನಿಂದಲೂ ಸಭಾಧ್ಯಕ್ಷ ಸ್ಥಾನದ ಘನತೆಗೆ ಯಾವುದೇ ಧಕ್ಕೆಯಾಗದಂತೆ ಕಾರ್ಯನಿರ್ವಹಿಸುತ್ತೇನೆ ಎಂದು ಹೇಳಿದರು.

ತಾವು ಈ ಹಂತಕ್ಕೆ ಬರಲು ಕ್ಷೇತ್ರದ ಜನರು, ಕಾರ್ಯಕರ್ತರು ಹಾಗೂ ಹಿರಿಯರ ಪ್ರೀತಿ, ಸಹಕಾರ ಮತ್ತು ಮಾರ್ಗದರ್ಶನವೇ ಪ್ರಮುಖ ಕಾರಣವಾಗಿದೆ. ತಮಗೆ ದೊರೆತಿರುವ ಈ ಮಹತ್ವದ ಗೌರವವನ್ನು ಉಳಿಸಿಕೊಂಡು ಗದಗ ಜಿಲ್ಲೆ ಹಾಗೂ ರೋಣ ಕ್ಷೇತ್ರಕ್ಕೆ ಇನ್ನಷ್ಟು ಗೌರವ ತರುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ ಎಂದು ತಿಳಿಸಿದರು.

ದ್ವೇಷ, ಆವೇಶವಿಲ್ಲದೆ ಸದನ ನಡೆಸುವ ಜವಾಬ್ದಾರಿ

ವಿಧಾನಸಭೆಯ ಕಲಾಪವನ್ನು ಯಾವುದೇ ದ್ವೇಷ ಅಥವಾ ಆವೇಶಕ್ಕೆ ಅವಕಾಶ ನೀಡದೆ ಸುಸೂತ್ರವಾಗಿ ನಡೆಸುವುದು ಸಭಾಧ್ಯಕ್ಷನ ಪ್ರಮುಖ ಜವಾಬ್ದಾರಿಯಾಗಿದೆ ಎಂದು ಜಿ.ಎಸ್. ಪಾಟೀಲ ಹೇಳಿದರು.

ಸಭಾಧ್ಯಕ್ಷ ಸ್ಥಾನದಲ್ಲಿದ್ದರೂ ಜನರೊಂದಿಗೆ ಒಡನಾಟ ಮುಂದುವರಿಸುವುದರ ಜತೆಗೆ ಆ ಸ್ಥಾನಕ್ಕೆ ಇರುವ ಘನತೆ ಮತ್ತು ಗೌರವವನ್ನು ಕಾಪಾಡಿಕೊಳ್ಳಬೇಕಾಗಿದೆ. ಈ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸಲು ಕ್ಷೇತ್ರದ ಜನರು ಸಂಪೂರ್ಣ ಬೆಂಬಲ ನೀಡುತ್ತಾರೆ ಎಂಬ ವಿಶ್ವಾಸವಿದೆ ಎಂದರು.

ಮಂತ್ರಿ ಸ್ಥಾನದ ಜವಾಬ್ದಾರಿ ಹಾಗೂ ಅದರ ವ್ಯಾಪ್ತಿಯ ಬಗ್ಗೆ ಜನರಿಗೆ ಹೆಚ್ಚಿನ ಅರಿವಿದೆ. ಆದರೆ ಸಭಾಧ್ಯಕ್ಷ ಸ್ಥಾನದ ಕರ್ತವ್ಯ ಮತ್ತು ಜವಾಬ್ದಾರಿಗಳ ಕುರಿತು ಹಲವರಿಗೆ ಪೂರ್ಣ ಮಾಹಿತಿ ಇಲ್ಲ. ಇದರಿಂದ ಇನ್ನು ಮುಂದೆ ತಾವು ಕ್ಷೇತ್ರದ ಜನರ ಕೈಗೆ ಸುಲಭವಾಗಿ ಸಿಗುವುದಿಲ್ಲ ಎಂಬ ಪ್ರೀತಿಯ ಆತಂಕ ಕೆಲವರಲ್ಲಿದೆ ಎಂದು ಹೇಳಿದರು.

ಆದರೆ, ಕೆಲವೇ ತಿಂಗಳುಗಳಲ್ಲಿ ಸಭಾಧ್ಯಕ್ಷ ಸ್ಥಾನದ ಜವಾಬ್ದಾರಿ ಹಾಗೂ ಅದರ ವ್ಯಾಪ್ತಿಯ ಬಗ್ಗೆ ಎಲ್ಲರಿಗೂ ಸ್ಪಷ್ಟ ಅರಿವಾಗಲಿದೆ. ಕ್ಷೇತ್ರದ ಜನರೊಂದಿಗಿನ ಸಂಬಂಧ ಮತ್ತು ಸಂಪರ್ಕದಲ್ಲಿ ಯಾವುದೇ ಅಂತರ ಉಂಟಾಗುವುದಿಲ್ಲ ಎಂದು ಭರವಸೆ ನೀಡಿದರು.

ಸಭಾಧ್ಯಕ್ಷರಾದ ಬಳಿಕ ಡಂಬಳ ಹೋಬಳಿ ಭಾಗಕ್ಕೆ ಮೊದಲ ಬಾರಿಗೆ ಆಗಮಿಸಿದ ಹಿನ್ನೆಲೆಯಲ್ಲಿ ಕದಾಂಪುರ ಗ್ರಾಮದಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಜಿ.ಎಸ್. ಪಾಟೀಲ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡರು. ಹೂಮಾಲೆ ಹಾಕಿ ಸನ್ಮಾನಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ರೋಣ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಸಂಗನಗೌಡ (ಮಿಥುನ) ಜಿ. ಪಾಟೀಲ, ಮರಿಯಪ್ಪ ಸಿದ್ದಣ್ಣವರ, ಮಹೇಶ ಗಡಗಿ, ಸೋಮಣ್ಣ ಗುಡ್ಡದ, ಕುಬೇರಪ್ಪ ಕೊಳ್ಳಾರ, ರೇವಣಸಿದ್ದ ಕರಿಗಾರ, ಕಳ್ಳೆಪ್ಪ ಪೂಜಾರ, ಬಸವರಡ್ಡಿ ಬಂಡಿಹಾಳ, ಬಾಬುಸಾಬ ಮೂಲಿಮನಿ, ನೂರಹಮ್ಮದ ಸರಕಾವಾಸ, ಕನಕಮೂರ್ತಿ ನರೇಗಲ್ಲ, ಮಲ್ಲಿಕಾರ್ಜುನ ಕಾರಪುಡಿ, ಜಯಮ್ಮ ಯಲಭೋವಿ, ಮಹಾದೇವಮ್ಮ ಕೊಳ್ಳಾರ, ಜ್ಯೋತಿ ಕುರಿ, ಕುಬೇರ ನಾಯ್ಕ, ನಾಗರಾಜ ಸಜ್ಜನ, ಸುರೇಶ ಗಡಗಿ, ಮಾರುತಿ ಎಮ್ಮಿ, ಕಾಶಣ್ಣ ಅಳವಂಡಿ, ಹನಮಂತ ಗದಗಿನ, ಮಲ್ಲಿಕಾರ್ಜುನ ಪ್ಯಾಟಿ, ಬಶೀರಹಮ್ಮದ ಒಡ್ಡಟ್ಟಿ ಸೇರಿದಂತೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಉಪಸ್ಥಿತರಿದ್ದರು.

ಸಭಾಧ್ಯಕ್ಷ ಸ್ಥಾನ ನನಗೆ ದೊರೆತಿರುವುದು ದೊಡ್ಡ ಜವಾಬ್ದಾರಿಯಾಗಿದೆ. ಆದರೆ ಈ ಜವಾಬ್ದಾರಿ ನನ್ನ ಕ್ಷೇತ್ರದ ಜನರ ಸೇವೆಗೆ ಎಂದಿಗೂ ಅಡ್ಡಿಯಾಗುವುದಿಲ್ಲ. ಜನರೊಂದಿಗೆ ನಿಕಟ ಸಂಪರ್ಕ ಉಳಿಸಿಕೊಂಡು, ಸಭಾಧ್ಯಕ್ಷ ಸ್ಥಾನದ ಘನತೆಯನ್ನು ಕಾಪಾಡುತ್ತಲೇ ಗದಗ ಜಿಲ್ಲೆ ಮತ್ತು ರೋಣ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುತ್ತೇನೆ.

– ಜಿ.ಎಸ್. ಪಾಟೀಲ, ಕರ್ನಾಟಕ ವಿಧಾನಸಭಾಧ್ಯಕ್ಷರು

ಜನಾಕ್ರೋಶದ ಮುಂದೆ ಕಾಂಗ್ರೆಸ್ ಮಂಡಿಯೂರಿದೆ’: ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ಆರ್.ಅಶೋಕ್ ವಾಗ್ದಾಳಿ!

0

ಬೆಂಗಳೂರು: ಸಚಿವ ಬಿ.ನಾಗೇಂದ್ರ ರಾಜೀನಾಮೆ ಘೋಷಿಸಿದ ಬೆನ್ನಲ್ಲೇ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಕಾಂಗ್ರೆಸ್ ಸರ್ಕಾರದ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಆರ್.ಅಶೋಕ್, “ಭ್ರಷ್ಟ ಕಾಂಗ್ರೆಸ್ ಸರ್ಕಾರ ಜನಾಕ್ರೋಶದ ಮುಂದೆ ಮಂಡಿಯೂರಿ ಶರಣಾಗಿದೆ” ಎಂದು ಟೀಕಿಸಿದ್ದಾರೆ.

ನಾಗೇಂದ್ರ ಅವರನ್ನು ರಕ್ಷಿಸುವ ಉದ್ದೇಶದಿಂದ ವಿಧಾನಮಂಡಲ ಅಧಿವೇಶನವನ್ನೇ ರದ್ದುಪಡಿಸಲಾಗಿತ್ತು ಎಂದು ಆರೋಪಿಸಿದ ಅವರು, ಕೊನೆಗೂ ಬಿಜೆಪಿಯ ಹೋರಾಟಕ್ಕೆ ಮಣಿದು ರಾಜೀನಾಮೆ ಪಡೆಯಲಾಗಿದೆ ಎಂದು ಹೇಳಿದ್ದಾರೆ.

ಬಿಜೆಪಿ ಪಾದಯಾತ್ರೆ ನಡೆಸುವುದಾಗಿ ಘೋಷಿಸಿದ ಬೆನ್ನಲ್ಲೇ ಕಾಂಗ್ರೆಸ್ ಸರ್ಕಾರ ರಾಜೀನಾಮೆ ಪಡೆಯುವ ಮೂಲಕ ತನ್ನ ಮಾನ ಉಳಿಸಿಕೊಳ್ಳುವ ಪ್ರಯತ್ನ ಮಾಡಿದೆ ಎಂದು ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ.

ಇನ್ನೂ ವಾಲ್ಮೀಕಿ ನಿಗಮದ ಹಗರಣ ಸಂಬಂಧ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ ಘೋಷಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ವೇಳೆ ಈ ಬಗ್ಗೆ ಅಧಿಕೃತ ಹೇಳಿಕೆ ನೀಡಿರುವ ಅವರು, ಪಕ್ಷಕ್ಕೆ ಮುಜುಗರ ಆಗಬಾರದು ಅಂತಾ ಸ್ವಇಚ್ಛೆಯಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ತಿಳಿಸಿದ್ದಾರೆ. ಈ ವೇಳೆ ಭಾವುಕರಾಗಿ ಕಣ್ಣೀರು ಹಾಕಿರುವ ಅವರು, ನನ್ನ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತೇನೆ. ಜನತಾ ನ್ಯಾಯಾಲಯಕ್ಕೆ ಬಂದು ಎಲ್ಲವನ್ನೂ ಎದುರಿಸಿ ಎಂದು ಬಿಜೆಪಿಗರಿಗೆ ಬಹಿರಂಗ ಸವಾಲು ಕೂಡ ಹಾಕಿದ್ದಾರೆ..

ದಾವಣಗೆರೆಯಲ್ಲಿ ರೈತರ ಪ್ರತಿಭಟನೆ: ಎಸಿ ಕಚೇರಿಗೆ ಮುತ್ತಿಗೆ ಯತ್ನ; ರೇಣುಕಾಚಾರ್ಯ ಸೇರಿ 200ಕ್ಕೂ ಹೆಚ್ಚು ಮಂದಿ ವಶಕ್ಕೆ

0

ದಾವಣಗೆರೆ: ಗುಟ್ಕಾ ನಿಷೇಧ ಆದೇಶ ಹಿಂಪಡೆಯಬೇಕು ಹಾಗೂ ಅಪ್ಪರ್ ಭದ್ರಾ ಯೋಜನೆಗೆ ನೀರು ಬಿಡುಗಡೆ ಮಾಡಬಾರದು ಎಂದು ಆಗ್ರಹಿಸಿ ದಾವಣಗೆರೆಯಲ್ಲಿ ರೈತರು ನಡೆಸಿದ ಪ್ರತಿಭಟನೆ ಶುಕ್ರವಾರ ತೀವ್ರಗೊಂಡಿತು.

ಎಸಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ, ರೈತ ಮುಖಂಡ ಮಾಡಾಳ್ ಮಲ್ಲಿಕಾರ್ಜುನ್ ಸೇರಿದಂತೆ 200ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದರು.

ಜಿಲ್ಲೆಯ ವಿವಿಧ ಭಾಗಗಳಿಂದ ಕಳೆದ ಮೂರು ದಿನಗಳಿಂದ ನಡೆಯುತ್ತಿದ್ದ ಪಾದಯಾತ್ರೆ ಶುಕ್ರವಾರ ದಾವಣಗೆರೆ ನಗರ ಪ್ರವೇಶಿಸಿತು. ರೇಣುಕಾಚಾರ್ಯ, ಮಾಡಾಳ್ ಮಲ್ಲಿಕಾರ್ಜುನ್ ಹಾಗೂ ಲೋಕಿಕೆರೆ ನಾಗರಾಜ್ ನೇತೃತ್ವದಲ್ಲಿ ರೈತರು ಜಯದೇವ ವೃತ್ತದಿಂದ ಎಸಿ ಕಚೇರಿಯತ್ತ ಮೆರವಣಿಗೆ ನಡೆಸಿದರು.

ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರಿಗೆ ಮಾರುಕಟ್ಟೆ ಸಮಸ್ಯೆ ಎದುರಾಗುವ ಸಾಧ್ಯತೆಯಿದೆ ಎಂದು ಪ್ರತಿಭಟನಾಕಾರರು ಹೇಳಿದರು. ಅಡಿಕೆ ಬೆಲೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿರುವುದರಿಂದ ನಿಷೇಧ ಆದೇಶವನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.

ಅಪ್ಪರ್ ಭದ್ರಾ ಯೋಜನೆಗೆ 3 ಟಿಎಂಸಿ ನೀರು ಬಿಡುಗಡೆ ಮಾಡುವ ಸರ್ಕಾರದ ನಿರ್ಧಾರಕ್ಕೂ ರೈತರು ವಿರೋಧ ವ್ಯಕ್ತಪಡಿಸಿದರು. ಈ ಕುರಿತು ಹಲವು ದಿನಗಳಿಂದ ರೈತರು ಹೋರಾಟ ನಡೆಸುತ್ತಿದ್ದರೂ ಸರ್ಕಾರ ಸೂಕ್ತವಾಗಿ ಸ್ಪಂದಿಸಿಲ್ಲ ಎಂದು ಮಾಡಾಳ್ ಮಲ್ಲಿಕಾರ್ಜುನ್ ಆರೋಪಿಸಿದರು.

ಪಿಬಿ ರಸ್ತೆಯಲ್ಲಿ ಪ್ರತಿಭಟನೆ:

ಪಾದಯಾತ್ರೆ ಪಿಬಿ ರಸ್ತೆಗೆ ತಲುಪಿದಾಗ ಪ್ರತಿಭಟನಾಕಾರರು ರಸ್ತೆ ತಡೆ ನಡೆಸಿದರು. ಕೆಲವರು ಟೈರ್‌ಗಳಿಗೆ ಬೆಂಕಿ ಹಚ್ಚಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಇದರಿಂದ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು.

ನಂತರ ಪ್ರತಿಭಟನಾಕಾರರು ಎಸಿ ಕಚೇರಿ ಆವರಣಕ್ಕೆ ಪ್ರವೇಶಿಸಲು ಮುಂದಾದರು. ಪೊಲೀಸರು ಅಳವಡಿಸಿದ್ದ ಬ್ಯಾರಿಕೇಡ್‌ಗಳನ್ನು ತೆರವುಗೊಳಿಸಲು ಯತ್ನಿಸಿದ ಸಂದರ್ಭದಲ್ಲಿ ಎರಡೂ ಕಡೆಯವರ ನಡುವೆ ತಳ್ಳಾಟ ಹಾಗೂ ಮಾತಿನ ಚಕಮಕಿ ನಡೆಯಿತು.

ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರು.

ಸೋಮವಾರ ದಾವಣಗೆರೆ ಬಂದ್‌ಗೆ ಎಚ್ಚರಿಕೆ:

ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ, ಮಾಡಾಳ್ ಮಲ್ಲಿಕಾರ್ಜುನ್ ಸೇರಿದಂತೆ 200ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಗುಟ್ಕಾ ನಿಷೇಧ ಆದೇಶ ಹಿಂಪಡೆಯಬೇಕು ಹಾಗೂ ಅಪ್ಪರ್ ಭದ್ರಾ ಯೋಜನೆಗೆ ನೀರು ಬಿಡುಗಡೆ ಮಾಡುವ ನಿರ್ಧಾರವನ್ನು ಕೈಬಿಡಬೇಕು ಎಂದು ಪ್ರತಿಭಟನಾ ಮುಖಂಡರು ಒತ್ತಾಯಿಸಿದ್ದಾರೆ.

ಬೇಡಿಕೆಗಳನ್ನು ಈಡೇರಿಸದಿದ್ದರೆ ಸೋಮವಾರ ದಾವಣಗೆರೆ ಬಂದ್ ನಡೆಸುವುದಾಗಿ ಪ್ರತಿಭಟನಾ ಮುಖಂಡರು ಎಚ್ಚರಿಕೆ ನೀಡಿದ್ದಾರೆ.

ಪ್ರತಿಭಟನೆ ಹಿನ್ನೆಲೆಯಲ್ಲಿ ನಗರದಲ್ಲಿ ಪೊಲೀಸ್ ಬಂದೋಬಸ್ತ್ ಹೆಚ್ಚಿಸಲಾಗಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿಡಲು ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ಕಣ್ಣೀರಿಟ್ಟುಕೊಂಡೇ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಬಿ.ನಾಗೇಂದ್ರ; ‘ಜನತಾ ನ್ಯಾಯಾಲಯಕ್ಕೆ ಬನ್ನಿ’ ಎಂದು ಬಿಜೆಪಿ ನಾಯಕರಿಗೆ ಸವಾಲ್

ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣ ಸಂಬಂಧ ಸಚಿವ ಬಿ.ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ.

ವಿಧಾನಸೌಧದಲ್ಲಿ ಶುಕ್ರವಾರ ಸುದ್ದಿಗೋಷ್ಠಿ ನಡೆಸಿದ ಅವರು, ಪಕ್ಷದ ವರಿಷ್ಠರಿಗೆ ಮುಜುಗರ ಉಂಟಾಗಬಾರದು ಎಂಬ ಕಾರಣಕ್ಕೆ ಸ್ವಇಚ್ಛೆಯಿಂದ ರಾಜೀನಾಮೆ ನೀಡುತ್ತಿರುವುದಾಗಿ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಭಾವುಕರಾಗಿ ಕಣ್ಣೀರು ಹಾಕಿರುವ ಅವರು, ತಮ್ಮ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುವುದಾಗಿ ತಿಳಿಸಿದರು. ಪ್ರಕರಣಕ್ಕೆ ಸಂಬಂಧಿಸಿದ ಆರೋಪಗಳನ್ನು ಜನರ ಮುಂದೆ ಸಮರ್ಥವಾಗಿ ಎದುರಿಸುವುದಾಗಿ ಹೇಳಿದ ಅವರು, ಬಿಜೆಪಿಯವರು ಜನತಾ ನ್ಯಾಯಾಲಯಕ್ಕೆ ಬರಲಿ ಎಂದು ಸವಾಲು ಹಾಕಿದರು.

ವಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ ನಾಗೇಂದ್ರ, ವಿಧಾನಸಭೆ ಕಲಾಪದ ವೇಳೆ ಹಲವು ವಿಷಯಗಳ ಕುರಿತು ಚರ್ಚೆಗೆ ಅವಕಾಶ ನೀಡುವಂತೆ ಮನವಿ ಮಾಡಲಾಗಿತ್ತು. ನೋಟಿಸ್ ನೀಡಿ ಚರ್ಚೆಗೆ ಬರುವಂತೆ ಕೇಳಿಕೊಂಡರೂ ವಿಪಕ್ಷಗಳು ಸ್ಪಂದಿಸಲಿಲ್ಲ ಎಂದು ಆರೋಪಿಸಿದರು.

ರಾಜ್ಯದಲ್ಲಿನ ಬರ ಪರಿಸ್ಥಿತಿ, KPSC ಅಕ್ರಮ, ಕಾವೇರಿ ನೀರಿನ ವಿಚಾರ ಹಾಗೂ ಕಸ್ತೂರಿ ರಂಗನ್ ವರದಿ ಸೇರಿದಂತೆ ಹಲವು ವಿಷಯಗಳ ಕುರಿತು ಸದನದಲ್ಲಿ ಚರ್ಚೆ ನಡೆಯಬೇಕಿತ್ತು. ಆದರೆ ವಿಪಕ್ಷಗಳು ಕಲಾಪಕ್ಕೆ ಅಡ್ಡಿಪಡಿಸಿದವು. ಇದೀಗ ಯಾವುದೇ ಸ್ಪಷ್ಟ ವಿಷಯವಿಲ್ಲದೆ ಪಾದಯಾತ್ರೆ ನಡೆಸಲು ಮುಂದಾಗಿವೆ ಎಂದು ನಾಗೇಂದ್ರ ಟೀಕಿಸಿದರು.

ಬಿಜೆಪಿ ನಾಯಕರು ಮನುಸ್ಮೃತಿ ವಿಚಾರಧಾರೆ ಮುಂದಿಟ್ಟುಕೊಂಡು ರಾಜಕೀಯ ಮಾಡುತ್ತಿದ್ದಾರೆ. “ಇದು ವೇದ ಕಾಲವಲ್ಲ, ಪುರಾಣ ಕಾಲವಲ್ಲ. ಇದು ಸಂವಿಧಾನದ ಕಾಲ, ಅಂಬೇಡ್ಕರ್ ಯುಗ” ಎಂದರು.

ದಲಿತರು, ಆದಿವಾಸಿಗಳು ಹಾಗೂ ಬಡವರು ಅಧಿಕಾರಕ್ಕೆ ಬರಬಾರದು ಎಂಬ ಮನಸ್ಥಿತಿ ಬಿಜೆಪಿಯಲ್ಲಿದೆ. ತಾವು ಯಾವುದೇ ಒತ್ತಡಕ್ಕೆ ಮಣಿಯುವುದಿಲ್ಲ. ಸಂವಿಧಾನದ ಮೇಲೆ ನಂಬಿಕೆ ಇಟ್ಟುಕೊಂಡು ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿದರು.

ವಾಲ್ಮೀಕಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ತಮ್ಮ ಪಾತ್ರವಿಲ್ಲ ಎಂದು ನಾಗೇಂದ್ರ ಸ್ಪಷ್ಟಪಡಿಸಿದರು.

“ನಾನು ಹಣ ವರ್ಗಾವಣೆಗೆ ಆದೇಶ ಮಾಡಿದ್ದೇನಾ? ನನ್ನ ನೋಟ್‌ಶೀಟ್ ಇದೆಯಾ? ಪ್ರಕರಣದಲ್ಲಿ ನನ್ನ ಪಾತ್ರವಿದೆ ಎಂಬುದಕ್ಕೆ ದಾಖಲೆ ತೋರಿಸಲಿ” ಎಂದು ಪ್ರಶ್ನಿಸಿದರು.

ಈ ಪ್ರಕರಣದಲ್ಲಿ ಹಣವನ್ನು ಸಂಪೂರ್ಣವಾಗಿ ವಾಪಸ್ ಪಡೆಯಲಾಗಿದೆ ಎಂದು ಹೇಳಿದ ಅವರು, ತಮ್ಮ ವಿರುದ್ಧದ ಆರೋಪಗಳು ತನಿಖೆಯ ಮೂಲಕ ಸುಳ್ಳೆಂದು ಸಾಬೀತಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಪ್ರಕರಣದ ತನಿಖೆ ನಡೆಸಿದ SIT ಮತ್ತು CID ಅಧಿಕಾರಿಗಳ ಮೇಲೆ ವಿಶ್ವಾಸವಿದೆ. ED ಮತ್ತು CBI ತನಿಖೆಯ ಬಗ್ಗೆಯೂ ಪ್ರಸ್ತಾಪಿಸಿದ ಅವರು, ಪ್ರಕರಣದಲ್ಲಿ ತಮ್ಮನ್ನು ಬಂಧಿಸಲಾಗಿತ್ತು. ಬಳಿಕ ನ್ಯಾಯಾಲಯದಿಂದ ಜಾಮೀನು ಪಡೆದು ಹೊರಬಂದಿರುವುದಾಗಿ ತಿಳಿಸಿದರು.

ಮೊದಲ ಚಾರ್ಜ್‌ಶೀಟ್‌ನಲ್ಲಿ ತಮ್ಮ ಹೆಸರು ಇರಲಿಲ್ಲ. ತಾವು ಸಚಿವರಾದ ಬಳಿಕ ಸಲ್ಲಿಸಲಾದ ಎರಡನೇ ಚಾರ್ಜ್‌ಶೀಟ್‌ನಲ್ಲಿ ತಮ್ಮ ಹೆಸರನ್ನು ಸೇರಿಸಲಾಗಿದೆ ಎಂದು ಅವರು ಆರೋಪಿಸಿದರು.

ತಮ್ಮ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವ ಕ್ರಮವನ್ನು ಸ್ವಾಗತಿಸುವುದಾಗಿ ಹೇಳಿದ ನಾಗೇಂದ್ರ, ಇದೇ ಮಾನದಂಡವನ್ನು ಇತರ ರಾಜಕಾರಣಿಗಳ ಪ್ರಕರಣಗಳಲ್ಲೂ ಅನುಸರಿಸಬೇಕು ಎಂದು ಆಗ್ರಹಿಸಿದರು.

“ಕುಮಾರಸ್ವಾಮಿ ಅವರ ವಿಚಾರದಲ್ಲಿ ಯಾಕೆ ಪ್ರಾಸಿಕ್ಯೂಷನ್‌ಗೆ ಕಳುಹಿಸಲಿಲ್ಲ? ನನಗೆ ಒಂದು ನ್ಯಾಯ, ಅವರಿಗೆ ಒಂದು ನ್ಯಾಯವೇ?” ಎಂದು ಪ್ರಶ್ನಿಸಿದರು.

ಬಿಜೆಪಿ ನಾಯಕರ ವಿರುದ್ಧದ ಪ್ರಕರಣಗಳಲ್ಲೂ ಕಾನೂನು ಪ್ರಕ್ರಿಯೆ ಸಮಾನವಾಗಿ ನಡೆಯಬೇಕು ಎಂದು ಹೇಳಿದರು.

ಜನಾರ್ದನ ರೆಡ್ಡಿ, ಶ್ರೀರಾಮುಲು ವಿರುದ್ಧ ಟೀಕೆ:

ಬಳ್ಳಾರಿ ಬಿಜೆಪಿ ನಾಯಕರಾದ ಜನಾರ್ದನ ರೆಡ್ಡಿ ಮತ್ತು ಶ್ರೀರಾಮುಲು ವಿರುದ್ಧವೂ ನಾಗೇಂದ್ರ ವಾಗ್ದಾಳಿ ನಡೆಸಿದರು.

“ಬಳ್ಳಾರಿಯಲ್ಲಿರುವ ನಾಯಕರು ಬನ್ನಿ. ಜನತಾ ನ್ಯಾಯಾಲಯಕ್ಕೆ ಹೋಗೋಣ” ಎಂದು ಹೇಳಿದ ಅವರು, ತಮ್ಮ ವಿರುದ್ಧದ ಆರೋಪಗಳನ್ನು ಜನರ ಮುಂದೆ ಚರ್ಚಿಸಲು ಸಿದ್ಧ. ED ಮತ್ತು CBI ತನಿಖೆಯ ಹೆಸರಿನಲ್ಲಿ ತಮ್ಮನ್ನು ಹೆದರಿಸಲು ಸಾಧ್ಯವಿಲ್ಲ. ಯಾವುದೇ ತನಿಖೆಯನ್ನು ಕಾನೂನುಬದ್ಧವಾಗಿ ಎದುರಿಸುವುದಾಗಿ ಹೇಳಿದರು.

‘ರಾಜೀನಾಮೆಯಿಂದ ಸರ್ಕಾರದ ಕೆಲಸಕ್ಕೆ ಅಡ್ಡಿಯಾಗಬಾರದು’:

ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಪಕ್ಷದ ನಾಯಕರು ತಮ್ಮ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದಂತೆ ತಮ್ಮ ಬೆಂಬಲಕ್ಕೆ ನಿಂತಿದ್ದಾರೆ. ಪಕ್ಷದ ವರಿಷ್ಠರಿಗೆ ಮುಜುಗರ ಉಂಟಾಗಬಾರದು ಮತ್ತು ಸರ್ಕಾರದ ಅಭಿವೃದ್ಧಿ ಕಾರ್ಯಗಳಿಗೆ ಯಾವುದೇ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ತಿಳಿಸಿದರು.

ಮುಂದಿನ ದಿನಗಳಲ್ಲಿ ತಮ್ಮ ಮೇಲಿನ ಆರೋಪಗಳ ವಿರುದ್ಧ ಕಾನೂನು ಹೋರಾಟ ನಡೆಸುವುದಾಗಿ ಹೇಳಿದ ನಾಗೇಂದ್ರ, ಚುನಾವಣೆಯ ಸಂದರ್ಭದಲ್ಲಿ ಈ ವಿಚಾರವನ್ನು ಜನರ ಮುಂದೆ ಇಡುವುದಾಗಿ ತಿಳಿಸಿದರು. “ನಾನು ಹೋರಾಟ ಮುಂದುವರಿಸುತ್ತೇನೆ. ಅನ್ಯಾಯವಾದರೆ ಅದನ್ನು ಪ್ರಶ್ನಿಸುತ್ತೇನೆ” ಎಂದು ನಾಗೇಂದ್ರ ಹೇಳಿದರು.