Home Blog

ತೆರಿಗೆ ಸಂಗ್ರಹದಲ್ಲೇ ಸರ್ಕಾರ ಬ್ಯುಸಿ, ಜನರ ಸಮಸ್ಯೆಗಳಿಗೆ ಪರಿಹಾರವಿಲ್ಲ: ಸಿ.ಎನ್. ಅಶ್ವತ್ಥನಾರಾಯಣ ಆರೋಪ

ಬೆಂಗಳೂರು: ರಾಜ್ಯ ಸರ್ಕಾರ ಜನರಿಂದ ವಿವಿಧ ರೀತಿಯ ತೆರಿಗೆಗಳನ್ನು ಸಂಗ್ರಹಿಸುತ್ತಿದ್ದರೂ, ಅವರ ಬದುಕಿಗೆ ಯಾವುದೇ ಭದ್ರತೆ ಅಥವಾ ಮೂಲಭೂತ ಸೌಲಭ್ಯಗಳನ್ನು ಒದಗಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಹಾಗೂ ಶಾಸಕ ಡಾ. ಸಿ.ಎನ್. ಅಶ್ವತ್ಥನಾರಾಯಣ ಆರೋಪಿಸಿದ್ದಾರೆ.

ನಗರದ ಜಗನ್ನಾಥ ಭವನದಲ್ಲಿರುವ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಳೆ ಬಂದಾಗ ಬೆಂಗಳೂರಿನ ಜನರು ಆತಂಕದಲ್ಲಿ ಬದುಕುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಸರ್ಕಾರ ಜನರ ಸಮಸ್ಯೆಗಳ ಬಗ್ಗೆ ನಿರ್ಲಕ್ಷ್ಯ ವಹಿಸಿದೆ ಎಂದು ಟೀಕಿಸಿದರು.

“ಪ್ರತಿ ವರ್ಷ ಮಳೆಗಾಲ ಆರಂಭವಾದಾಗ ಬೆಂಗಳೂರಿನಲ್ಲಿ ನೂರಾರು ಸಮಸ್ಯೆಗಳು ತಲೆದೋರುತ್ತವೆ. ಆದರೆ ಅವುಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವಲ್ಲಿ ಸರ್ಕಾರ ವಿಫಲವಾಗಿದೆ. ಇತ್ತೀಚೆಗೆ ಬೌರಿಂಗ್ ಆಸ್ಪತ್ರೆ ಸಮೀಪ ಕಾಂಪೌಂಡ್ ಕುಸಿದು ಏಳು ಮಂದಿ ಮೃತಪಟ್ಟಿದ್ದರು. ನಿನ್ನೆ ಮತ್ತೊಬ್ಬರು ಸಾವನ್ನಪ್ಪಿದ್ದಾರೆ. ಇವು ದಾಖಲಾಗಿರುವ ಸಾವುಗಳು ಮಾತ್ರ. ಗುಂಡಿಗಳಲ್ಲಿ ಬಿದ್ದು ಅಥವಾ ಮರದ ಕೊಂಬೆಗಳು ಬಿದ್ದು ಮೃತಪಟ್ಟವರ ಸಂಖ್ಯೆ ಬೇರೆ ಇದೆ” ಎಂದು ಹೇಳಿದರು.

ಜನರ ಜೀವಹಾನಿಯಂತಹ ಗಂಭೀರ ಘಟನೆಗಳ ಬಗ್ಗೆ ಸರ್ಕಾರ ಯಾವುದೇ ಕಾಳಜಿ ತೋರಿಸುತ್ತಿಲ್ಲ ಎಂದು ಆರೋಪಿಸಿದ ಅವರು, ಮುಂಗಾರು ಆರಂಭಕ್ಕೂ ಮುನ್ನ ನಗರದಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳತ್ತ ಸರ್ಕಾರ ಗಮನಹರಿಸಿಲ್ಲ ಎಂದರು.

ಮಾರತಹಳ್ಳಿ, ಸಿಲ್ಕ್ ಬೋರ್ಡ್, ಕೆ.ಆರ್. ಸರ್ಕಲ್ ಸೇರಿದಂತೆ ನಗರದ ಹಲವು ಪ್ರಮುಖ ಜಂಕ್ಷನ್‌ಗಳು ಮಳೆ ಬಂದಾಗ ಜಲಾವೃತವಾಗುತ್ತಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗುವ ಸಮಸ್ಯೆ ವರ್ಷದಿಂದ ವರ್ಷಕ್ಕೆ ಮುಂದುವರಿಯುತ್ತಿದೆ. ಆದರೂ ಸರ್ಕಾರದಿಂದ ಯಾವುದೇ ಪರಿಣಾಮಕಾರಿ ಕ್ರಮಗಳು ಕಾಣಿಸುತ್ತಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

“ಮನೆ ತೆರಿಗೆ, ಘನತ್ಯಾಜ್ಯ ತೆರಿಗೆ ಸೇರಿದಂತೆ ವಿವಿಧ ಶುಲ್ಕಗಳ ಮೂಲಕ ಸರ್ಕಾರ ಸಾವಿರಾರು ಕೋಟಿ ರೂಪಾಯಿ ಸಂಗ್ರಹಿಸುತ್ತದೆ. ಆದರೆ ಸಾರ್ವಜನಿಕರಿಗೆ ಅಗತ್ಯವಾದ ಸೇವೆಗಳನ್ನು ಒದಗಿಸುವಲ್ಲಿ ವಿಫಲವಾಗಿದೆ. ಮಳೆ ಬಂದರೆ ಇಡೀ ಬೆಂಗಳೂರು ಮುಳುಗುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ” ಎಂದು ದೂರಿದರು.

ನಗರ ಮತ್ತು ರಾಜ್ಯದ ಆಡಳಿತ ನಿರ್ವಹಣೆಯಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದ ಅಶ್ವತ್ಥನಾರಾಯಣ, ಸಮಸ್ಯೆಗಳನ್ನು ಬಗೆಹರಿಸಲು ಅಗತ್ಯವಿರುವ ಹಣ ಸರ್ಕಾರದ ಬಳಿ ಇದ್ದರೂ ಅದನ್ನು ಸಮರ್ಪಕವಾಗಿ ಬಳಸುತ್ತಿಲ್ಲ. ಹೀಗಾಗಿ ಕೂಡಲೇ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ದಾರಿಯಲ್ಲಿ ಸಿಕ್ಕ ₹1.67 ಲಕ್ಷ ಪೊಲೀಸರಿಗೆ ಒಪ್ಪಿಸಿದ ಯುವಕರು!

ಕೊಪ್ಪಳ: ನಗರದ ಅಶೋಕ್ ಸರ್ಕಲ್ ಬಳಿ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ವ್ಯಕ್ತಿಯೊಬ್ಬರು ಕಳೆದುಕೊಂಡಿದ್ದ ₹1,67,330 ನಗದು ಹಣವನ್ನು ಇಬ್ಬರು ಯುವಕರು ಪ್ರಾಮಾಣಿಕವಾಗಿ ಪೊಲೀಸ್ ಠಾಣೆಗೆ ಒಪ್ಪಿಸಿ ಮಾದರಿಯಾಗಿದ್ದಾರೆ.

ಬೀರಪ್ಪ ತಂದೆ ಮರಿಯಪ್ಪ ಅವರು ಬೈಕ್‌ನಲ್ಲಿ ತೆರಳುವಾಗ ಹಣವಿದ್ದ ಬ್ಯಾಗ್ ದಾರಿಯಲ್ಲಿ ಬಿದ್ದಿತ್ತು. ಇದೇ ವೇಳೆ ಜಾಕೀರ್ ತಂದೆ ಅಬ್ದುಲ್ ಶುಕೂರ್ ಸಾಬ್ ಹಾಗೂ ಇಂದ್ರೇಶ್ ತಂದೆ ರಾಮಪ್ಪ ಕೊಳ್ಳಿ ದನಕಾದೊಡ್ಡಿ ಅವರಿಗೆ ಬ್ಯಾಗ್ ಸಿಕ್ಕಿದೆ.

ಬ್ಯಾಗ್ ಪರಿಶೀಲಿಸಿದಾಗ ಅದರೊಳಗೆ ₹1,67,330 ನಗದು ಇರುವುದನ್ನು ಕಂಡ ಇಬ್ಬರು, ಹಣವನ್ನು ತಮ್ಮ ಬಳಿ ಇಟ್ಟುಕೊಳ್ಳದೆ ತಕ್ಷಣವೇ ಕೊಪ್ಪಳ ನಗರ ಪೊಲೀಸ್ ಠಾಣೆಗೆ ತೆರಳಿ ಪೊಲೀಸರಿಗೆ ಒಪ್ಪಿಸಿದರು.

ನಂತರ ಪೊಲೀಸರು ಹಣ ಕಳೆದುಕೊಂಡಿದ್ದ ಬೀರಪ್ಪ ಅವರಿಗೆ ನಗದು ಹಣವನ್ನು ಹಸ್ತಾಂತರಿಸಿದರು. ಸಂಕಷ್ಟದ ಕಾಲದಲ್ಲಿ ಪ್ರಾಮಾಣಿಕತೆ ಮೆರೆದ ಜಾಕೀರ್ ಹಾಗೂ ಇಂದ್ರೇಶ್ ಅವರ ಕಾರ್ಯವನ್ನು ಸಾರ್ವಜನಿಕರು ಹಾಗೂ ಪೊಲೀಸರು ಶ್ಲಾಘಿಸಿದ್ದಾರೆ.

IPL 2026: ಗಿಲ್-ಸುದರ್ಶನ್ ಜೋಡಿಯ ಅಬ್ಬರಕ್ಕೆ ಗೇಲ್-ಕೊಹ್ಲಿ ದಾಖಲೆ ನುಚ್ಚುನೂರು!

ಚಂಡೀಗಢ: ರಾಜಸ್ಥಾನ್ ರಾಯಲ್ಸ್ ವಿರುದ್ಧದ ಕ್ವಾಲಿಫೈಯರ್-2 ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿದ ಗುಜರಾತ್ ಟೈಟಾನ್ಸ್ ತಂಡ ಮೂರನೇ ಬಾರಿ ಐಪಿಎಲ್ ಫೈನಲ್ ಪ್ರವೇಶಿಸಿದೆ. ಆದರೆ ಈ ಗೆಲುವಿಗಿಂತಲೂ ಹೆಚ್ಚು ಚರ್ಚೆಗೆ ಗ್ರಾಸವಾಗಿರುವುದು ನಾಯಕ ಶುಭಮನ್ ಗಿಲ್ ಹಾಗೂ ಸಾಯಿ ಸುದರ್ಶನ್ ಅವರ ಅಮೋಘ ಆರಂಭಿಕ ಜೊತೆಯಾಟ.

ರಾಜಸ್ಥಾನ್ ನೀಡಿದ್ದ 215 ರನ್‌ಗಳ ಗುರಿಯನ್ನು ಬೆನ್ನತ್ತಿದ ಗುಜರಾತ್ ಪರ ಇನ್ನಿಂಗ್ಸ್ ಆರಂಭಿಸಿದ ಗಿಲ್ ಮತ್ತು ಸುದರ್ಶನ್ ಮೊದಲ ವಿಕೆಟ್‌ಗೆ 167 ರನ್‌ಗಳ ಭರ್ಜರಿ ಜೊತೆಯಾಟವಾಡಿದರು. ಈ ಮೂಲಕ ಟಿ20 ಕ್ರಿಕೆಟ್‌ನಲ್ಲಿ ತಮ್ಮ 11ನೇ ಶತಕದ ಜೊತೆಯಾಟ ದಾಖಲಿಸಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.

ಕೊಹ್ಲಿ-ಗೇಲ್ ದಾಖಲೆಯನ್ನು ಹಿಂದಿಕ್ಕಿದ ಜೋಡಿ

ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಶತಕದ ಜೊತೆಯಾಟ ನಡೆಸಿದ ಜೋಡಿ ಎಂಬ ದಾಖಲೆಯನ್ನು ಇದೀಗ ಗಿಲ್ ಮತ್ತು ಸಾಯಿ ಸುದರ್ಶನ್ ತಮ್ಮದಾಗಿಸಿಕೊಂಡಿದ್ದಾರೆ.

ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಶತಕದ ಜೊತೆಯಾಟಗಳು

  1. ಶುಭಮನ್ ಗಿಲ್ – ಸಾಯಿ ಸುದರ್ಶನ್: 11 ಶತಕದ ಜೊತೆಯಾಟ (48 ಇನ್ನಿಂಗ್ಸ್)
  2. ಕ್ರಿಸ್ ಗೇಲ್ – ವಿರಾಟ್ ಕೊಹ್ಲಿ: 10 ಶತಕದ ಜೊತೆಯಾಟ (63 ಇನ್ನಿಂಗ್ಸ್)
  3. ಬಾಬರ್ ಆಜಂ – ಮೊಹಮ್ಮದ್ ರಿಜ್ವಾನ್: 10 ಶತಕದ ಜೊತೆಯಾಟ (75 ಇನ್ನಿಂಗ್ಸ್)
  4. ಎಬಿ ಡಿವಿಲಿಯರ್ಸ್ – ವಿರಾಟ್ ಕೊಹ್ಲಿ: 10 ಶತಕದ ಜೊತೆಯಾಟ (77 ಇನ್ನಿಂಗ್ಸ್)
  5. ಅಭಿಷೇಕ್ ಶರ್ಮಾ – ಪ್ರಭ್ಸಿಮ್ರನ್ ಸಿಂಗ್: 10 ಶತಕದ ಜೊತೆಯಾಟ (ದೇಶೀಯ ಟಿ20 ಕ್ರಿಕೆಟ್)

ಇದಲ್ಲದೆ, ಮೊದಲ ವಿಕೆಟ್‌ಗೆ 100ಕ್ಕೂ ಹೆಚ್ಚು ರನ್‌ಗಳ ಜೊತೆಯಾಟವನ್ನು ಎಂಟು ಬಾರಿ ನಿರ್ಮಿಸಿದ ಸಾಧನೆಯನ್ನು ಗಿಲ್-ಸುದರ್ಶನ್ ಜೋಡಿ ಮಾಡಿದೆ. ಈ ಹಿಂದೆ ಈ ದಾಖಲೆ ಪಾಕಿಸ್ತಾನದ ಬಾಬರ್ ಆಜಂ ಮತ್ತು ಮೊಹಮ್ಮದ್ ರಿಜ್ವಾನ್ ಹೆಸರಿನಲ್ಲಿತ್ತು.

ಐಪಿಎಲ್ ಪ್ಲೇಆಫ್‌ನಲ್ಲೂ ಹೊಸ ದಾಖಲೆ

167 ರನ್‌ಗಳ ಜೊತೆಯಾಟದ ಮೂಲಕ ಐಪಿಎಲ್ ಪ್ಲೇಆಫ್ ಇತಿಹಾಸದಲ್ಲೇ ಯಾವುದೇ ವಿಕೆಟ್‌ಗೆ ಅತ್ಯಧಿಕ ಜೊತೆಯಾಟದ ದಾಖಲೆಯನ್ನೂ ಈ ಜೋಡಿ ತಮ್ಮ ಹೆಸರಿಗೆ ಬರೆದುಕೊಂಡಿದೆ.

ಐಪಿಎಲ್ ಪ್ಲೇಆಫ್‌ನಲ್ಲಿ ಅತ್ಯಧಿಕ ಜೊತೆಯಾಟಗಳು

  1. ಗಿಲ್ – ಸಾಯಿ ಸುದರ್ಶನ್ (ಜಿಟಿ vs ಆರ್‌ಆರ್, 2026 ಕ್ವಾಲಿಫೈಯರ್-2): 167 ರನ್
  2. ಮೈಕಲ್ ಹಸ್ಸಿ – ಮುರಳಿ ವಿಜಯ್ (ಸಿಎಸ್ಕೆ vs ಆರ್‌ಸಿಬಿ, 2011 ಫೈನಲ್): 159 ರನ್
  3. ಮೈಕಲ್ ಹಸ್ಸಿ – ಸುರೇಶ್ ರೈನಾ (ಸಿಎಸ್ಕೆ vs ಮುಂಬೈ, 2013 ಕ್ವಾಲಿಫೈಯರ್): ಅಜೇಯ 140 ರನ್
  4. ಗಿಲ್ – ಸಾಯಿ ಸುದರ್ಶನ್ (ಜಿಟಿ vs ಮುಂಬೈ, 2023 ಕ್ವಾಲಿಫೈಯರ್-2): 138 ರನ್
  5. ಮನ್ವಿಂದರ್ ಬಿಸ್ಲಾ – ಜಾಕ್ ಕಾಲಿಸ್ (ಕೆಕೆಆರ್ vs ಸಿಎಸ್ಕೆ, 2012 ಫೈನಲ್): 136 ರನ್

ರಾಜಸ್ಥಾನ್ ರಾಯಲ್ಸ್ ನೀಡಿದ್ದ 215 ರನ್‌ಗಳ ಗುರಿ ಬೆನ್ನತ್ತಿದ ಗುಜರಾತ್ ಪರ ಗಿಲ್ ಮತ್ತು ಸುದರ್ಶನ್ ಕೇವಲ 77 ಎಸೆತಗಳಲ್ಲಿ 167 ರನ್ ಸೇರಿಸಿ ತಂಡದ ಗೆಲುವಿಗೆ ಭದ್ರ ಅಡಿಪಾಯ ಹಾಕಿದರು.

ಸಾಯಿ ಸುದರ್ಶನ್ 32 ಎಸೆತಗಳಲ್ಲಿ 58 ರನ್ ಗಳಿಸಿ ಬ್ರಿಜೇಶ್ ಶರ್ಮಾಗೆ ವಿಕೆಟ್ ಒಪ್ಪಿಸಿದರು. ಮತ್ತೊಂದೆಡೆ ನಾಯಕ ಶುಭಮನ್ ಗಿಲ್ 53 ಎಸೆತಗಳಲ್ಲಿ 104 ರನ್ ಸಿಡಿಸಿ ತಂಡವನ್ನು ಗೆಲುವಿನ ಸನಿಹಕ್ಕೆ ಕೊಂಡೊಯ್ದರು. ಅವರನ್ನು ಜೋಫ್ರಾ ಆರ್ಚರ್ ಔಟ್ ಮಾಡಿದರೂ, ಆಗಲೇ ಪಂದ್ಯ ಗುಜರಾತ್ ಹಿಡಿತಕ್ಕೆ ಬಂದಿತ್ತು.

ಈ ಆರಂಭಿಕ ಜೋಡಿಯ ನಿರ್ಣಾಯಕ ಜೊತೆಯಾಟದ ನೆರವಿನಿಂದ ಗುಜರಾತ್ ಟೈಟಾನ್ಸ್ ಇನ್ನೂ 8 ಎಸೆತಗಳು ಬಾಕಿ ಇರುವಾಗಲೇ ಗುರಿ ತಲುಪಿ ಫೈನಲ್‌ಗೆ ಲಗ್ಗೆ ಇಟ್ಟಿತು.

ಶಾಸಕಾಂಗ ಪಕ್ಷದ ಸಭೆಯಲ್ಲಿ ಡಿಕೆ ಶಿವಕುಮಾರ್ ಹೆಸರು ಅಧಿಕೃತ ಘೋಷಣೆ: ಸತೀಶ್ ಜಾರಕಿಹೊಳಿ

ಬೆಂಗಳೂರು: ಕಾಂಗ್ರೆಸ್ ಹೈಕಮಾಂಡ್ ನಿರ್ಧಾರದಂತೆ ಇಂದು ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷ (ಸಿಎಲ್‌ಪಿ) ಸಭೆಯಲ್ಲಿ ಮುಖ್ಯಮಂತ್ರಿ ಹುದ್ದೆಗೆ ಡಿ.ಕೆ. ಶಿವಕುಮಾರ್ ಅವರ ಹೆಸರನ್ನು ಅಧಿಕೃತವಾಗಿ ಘೋಷಿಸಲಾಗುತ್ತದೆ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ಇದೇ ಸಭೆಯಲ್ಲಿ ಸಚಿವ ಸಂಪುಟದ ರೂಪುರೇಷೆಗಳ ಕುರಿತೂ ಮಹತ್ವದ ಚರ್ಚೆ ನಡೆಯುವ ಸಾಧ್ಯತೆ ಇದೆ ಎಂದು ಅವರು ಹೇಳಿದರು.

ನಗರದ ಸರ್ಕಾರಿ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಜಾರಕಿಹೊಳಿ, ಸಿಎಲ್‌ಪಿ ಸಭೆಯ ಪ್ರಮುಖ ಅಜೆಂಡಾ ಮುಖ್ಯಮಂತ್ರಿ ಆಯ್ಕೆ ಮಾತ್ರವಾಗಿದ್ದು, ಹೈಕಮಾಂಡ್ ಈಗಾಗಲೇ ತೆಗೆದುಕೊಂಡಿರುವ ತೀರ್ಮಾನದಂತೆ ಡಿ.ಕೆ. ಶಿವಕುಮಾರ್ ಮುಂದಿನ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಸ್ಪಷ್ಟಪಡಿಸಿದರು.

“ಹೈಕಮಾಂಡ್ ಸೂಚನೆಯಂತೆ ಡಿ.ಕೆ. ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಆಯ್ಕೆ ಮಾಡಲಾಗಿದೆ. ಇಂದು ನಡೆಯುವ ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ನಿರ್ಧಾರಕ್ಕೆ ಅಧಿಕೃತ ಮುದ್ರೆ ಬೀಳಲಿದೆ” ಎಂದು ಜಾರಕಿಹೊಳಿ ಹೇಳಿದರು.

ಪ್ರಮಾಣ ವಚನ ಸ್ವೀಕಾರ ಸಮಾರಂಭದ ದಿನಾಂಕ ಮತ್ತು ಸಮಯ ನಿಗದಿಪಡಿಸುವ ಉದ್ದೇಶದಿಂದ ಡಿ.ಕೆ. ಶಿವಕುಮಾರ್ ಅವರು ರಾಜ್ಯಪಾಲರನ್ನು ಭೇಟಿ ಮಾಡಿದ್ದಾರೆ. ಸಮಾರಂಭದ ಕುರಿತು ಶೀಘ್ರದಲ್ಲೇ ಅಧಿಕೃತ ಘೋಷಣೆ ಹೊರಬೀಳುವ ನಿರೀಕ್ಷೆಯಿದೆ ಎಂದು ಅವರು ತಿಳಿಸಿದರು.

ರಾಜ್ಯದಲ್ಲಿ ಮೂರು ಅಥವಾ ನಾಲ್ಕು ಉಪ ಮುಖ್ಯಮಂತ್ರಿ ಹುದ್ದೆಗಳನ್ನು ಸೃಷ್ಟಿಸುವ ಕುರಿತು ಪಕ್ಷದ ವರಿಷ್ಠರು ಚರ್ಚೆ ನಡೆಸುತ್ತಿದ್ದಾರೆ. ಈ ವಿಚಾರದಲ್ಲಿ ಅಂತಿಮ ನಿರ್ಧಾರವನ್ನು ಹೈಕಮಾಂಡ್ ತೆಗೆದುಕೊಳ್ಳಲಿದ್ದು, ನಾಳೆಯೊಳಗೆ ಸ್ಪಷ್ಟ ಚಿತ್ರಣ ದೊರೆಯಬಹುದು ಎಂದು ಜಾರಕಿಹೊಳಿ ಹೇಳಿದರು.

ತಮ್ಮ ಹೆಸರೂ ಡಿಸಿಎಂ ಹುದ್ದೆಗೆ ಕೇಳಿಬರುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಪಕ್ಷ ಯಾರಿಗೆ ಯಾವ ಜವಾಬ್ದಾರಿ ನೀಡಬೇಕು ಎಂಬುದನ್ನು ತಾನೇ ನಿರ್ಧರಿಸುತ್ತದೆ. ತಮ್ಮಿಂದ ಯಾವುದೇ ಬೇಡಿಕೆ ಇಲ್ಲ ಎಂದು ಸ್ಪಷ್ಟಪಡಿಸಿದರು.

ಕೆಪಿಸಿಸಿ ಅಧ್ಯಕ್ಷ ಹುದ್ದೆಗೆ ಯಾರನ್ನು ನೇಮಿಸಲಾಗುತ್ತದೆ ಎಂಬ ಪ್ರಶ್ನೆಗೆ ಉತ್ತರಿಸಿದ ಜಾರಕಿಹೊಳಿ, ಈ ಕುರಿತು ಇನ್ನೂ ಯಾವುದೇ ಅಂತಿಮ ನಿರ್ಧಾರವಾಗಿಲ್ಲ ಎಂದರು. ವರಿಷ್ಠರ ಬಳಿ ಎರಡು ಅಥವಾ ಮೂರು ಹೆಸರುಗಳು ಇರಬಹುದು. ಅವರಲ್ಲಿ ಸೂಕ್ತ ವ್ಯಕ್ತಿಯನ್ನು ಆಯ್ಕೆ ಮಾಡುವ ಜವಾಬ್ದಾರಿ ಹೈಕಮಾಂಡ್‌ಗೇ ಸೇರಿದೆ ಎಂದು ಹೇಳಿದರು.

ಹೊಸ ಸಚಿವ ಸಂಪುಟ ರಚನೆ ಕುರಿತು ಮಾತನಾಡಿದ ಅವರು, ಆಡಳಿತದಲ್ಲಿ ಅನುಭವಿಗಳೂ ಬೇಕು, ಹೊಸ ಮುಖಗಳಿಗೂ ಅವಕಾಶ ಸಿಗಬೇಕು. ಸಚಿವ ಸಂಪುಟದಲ್ಲಿ ಈ ಎರಡರ ಸಮತೋಲನ ಕಾಪಾಡುವುದು ಅಗತ್ಯವಾಗಿದ್ದು, ಅದನ್ನು ಗಮನದಲ್ಲಿಟ್ಟುಕೊಂಡೇ ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ ಎಂದು ತಿಳಿಸಿದರು.

ಶವಾಗಾರದಲ್ಲೇ ಅಮಾನವೀಯ ಕೃತ್ಯ! ಮಹಿಳಾ ಶವಗಳ ಫೋಟೋ ಕ್ಲಿಕ್ಕಿಸಿದ ಅಟೆಂಡರ್: ವರದಿ ಕೇಳಿದ ಮಹಿಳಾ ಆಯೋಗ

0

ಬೀದರ್: ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ನಡೆದಿರುವ ಘೋರ ಘಟನೆ ರಾಜ್ಯದಲ್ಲಿ ಭಾರೀ ಆಘಾತ ಮೂಡಿಸಿದೆ. ಬ್ರಿಮ್ಸ್ ಆಸ್ಪತ್ರೆಯ ಅಟೆಂಡರ್ ಒಬ್ಬನು ಮಹಿಳಾ ಶವಗಳ ಬೆತ್ತಲೆ ಫೋಟೋಗಳನ್ನು ಮೊಬೈಲ್‌ನಲ್ಲಿ ತೆಗೆದುಕೊಂಡು ಸಂಗ್ರಹಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

ಮಾಹಿತಿಯ ಪ್ರಕಾರ, ಶವಾಗಾರದಲ್ಲಿ ಅನುಮತಿ ಇಲ್ಲದೇ ಶವಗಳ ಬಟ್ಟೆ ತೆಗೆದು ಫೋಟೋ ತೆಗೆದಿರುವುದು ವೈದ್ಯಕೀಯ ಗೌಪ್ಯತೆ ಮತ್ತು ಮಾನವೀಯತೆಯ ಗಂಭೀರ ಉಲ್ಲಂಘನೆಯಾಗಿದೆ. ಈ ಘಟನೆ ಬೆಳಕಿಗೆ ಬರುತ್ತಿದ್ದಂತೆಯೇ ಸಾರ್ವಜನಿಕರಿಂದ ತೀವ್ರ ಖಂಡನೆ ವ್ಯಕ್ತವಾಗಿದೆ.

ಕರ್ನಾಟಕ ರಾಜ್ಯ ಮಹಿಳಾ ಆಯೋಗವು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಆರೋಗ್ಯ ಇಲಾಖೆಗೆ ವರದಿ ನೀಡುವಂತೆ ಸೂಚಿಸಿದೆ ಮತ್ತು ತಪ್ಪಿತಸ್ಥರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳುವಂತೆ ಕೋರಿದೆ.

ಆರೋಪಿ ಮುನೀರ್ ಅಹಮದ್ ವಿರುದ್ಧ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

‘ಸಂಭ್ರಮ ಕಡಿಮೆ ಮಾಡಿ, ತೀರ್ಮಾನ ಎಚ್ಚರಿಕೆಯಿಂದ ತೆಗೆದುಕೊಳ್ಳಿ’: ಸಿಎಂ ಪಟ್ಟಾಭಿಷೇಕಕ್ಕೂ ಮುನ್ನ ಡಿಕೆಶಿಗೆ ಅಜ್ಜಯ್ಯನ ಎಚ್ಚರಿಕೆ!

ಬೆಂಗಳೂರು: ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಮುನ್ನ ಡಿ.ಕೆ. ಶಿವಕುಮಾರ್ ನಾಗರಬಾವಿಯ ಅಜ್ಜಯ್ಯನ ಶಾಖಾ ಮಠಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಅಜ್ಜಯ್ಯ ಡಿಕೆಶಿಗೆ ಮಹತ್ವದ ಸಲಹೆ ಹಾಗೂ ಎಚ್ಚರಿಕೆ ನೀಡಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

ರಾಜ್ಯಪಾಲರ ಭೇಟಿಯ ಬಳಿಕ ಪತ್ನಿ ಉಷಾ ಶಿವಕುಮಾರ್ ಹಾಗೂ ಸಂಸದ ಡಿ.ಕೆ. ಸುರೇಶ್ ಅವರೊಂದಿಗೆ ಮಠಕ್ಕೆ ಆಗಮಿಸಿದ ಡಿಕೆಶಿ, ಗದ್ದುಗೆಗೆ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು.

ಮಠದಲ್ಲಿ ಆಶೀರ್ವಚನ ನೀಡಿದ ಅಜ್ಜಯ್ಯ, “ಅತಿಯಾದ ಸಂಭ್ರಮಾಚರಣೆ ಬೇಡ. ಪ್ರತಿಯೊಂದು ನಿರ್ಧಾರವನ್ನು ಯೋಚಿಸಿ ತೆಗೆದುಕೊಳ್ಳಿ. ಮಳೆಗೆ ಪರಿಹಾರವಿದೆ, ಆದರೆ ಸಮಯ ಮತ್ತು ಸಂದರ್ಭದ ತೀರ್ಮಾನ ನಿಮ್ಮ ಕೈಯಲ್ಲಿದೆ” ಎಂದು ಸಲಹೆ ನೀಡಿದ್ದಾರೆ ಎನ್ನಲಾಗಿದೆ.

ಜೂನ್ 3ರಂದು ಎರಡು ಶುಭ ಮುಹೂರ್ತಗಳಿದ್ದು, ಪ್ರಮಾಣವಚನ ಕಾರ್ಯಕ್ರಮದ ಸಮಯ ಹಾಗೂ ಸ್ಥಳದ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳುವಂತೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.

ಸಿಎಲ್​​ಪಿ ಸಭೆ ಮುನ್ನವೇ ರಾಜ್ಯಪಾಲರ ಭೇಟಿಯಾದ ಡಿ.ಕೆ. ಶಿವಕುಮಾರ್​​: ಕಾರಣ ಇಲ್ಲಿದೆ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದಾಗಿ, ಮುಖ್ಯಮಂತ್ರಿ ಹುದ್ದೆಯ ಪ್ರಮುಖ ಆಕಾಂಕ್ಷಿಯಾಗಿರುವ ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಹಾಗೂ ಮಾಜಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶನಿವಾರ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿದರು.

ಬೆಂಗಳೂರಿನ ಲೋಕಭವನದಲ್ಲಿ ನಡೆದ ಈ ಭೇಟಿಯು ರಾಜಕೀಯ ವಲಯದಲ್ಲಿ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಇಂದು ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್ಪಿ) ಸಭೆಯಲ್ಲಿ ಡಿ.ಕೆ. ಶಿವಕುಮಾರ್ ಅವರನ್ನು ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ ಮಾಡುವ ಸಾಧ್ಯತೆ ಹೆಚ್ಚಿರುವ ಹಿನ್ನೆಲೆಯಲ್ಲಿ ಈ ಭೇಟಿ ಮಹತ್ವ ಪಡೆದಿದೆ.

ಮೂಲಗಳ ಪ್ರಕಾರ, ನೂತನ ಸರ್ಕಾರ ರಚನೆ ಹಾಗೂ ಮುಖ್ಯಮಂತ್ರಿ ಮತ್ತು ಸಚಿವ ಸಂಪುಟದ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಸಂಬಂಧಿಸಿದಂತೆ ಅನೌಪಚಾರಿಕ ಚರ್ಚೆ ನಡೆಸುವ ಉದ್ದೇಶದಿಂದ ಶಿವಕುಮಾರ್ ಅವರು ರಾಜ್ಯಪಾಲರನ್ನು ಭೇಟಿಯಾಗಿದ್ದಾರೆ ಎನ್ನಲಾಗಿದೆ.

ಈ ನಡುವೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಭಾನುವಾರ ಉಪರಾಷ್ಟ್ರಪತಿಗಳ ಕಾರ್ಯಕ್ರಮದಲ್ಲಿ ಭಾಗವಹಿಸಲು ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳಕ್ಕೆ ತೆರಳುವ ನಿರೀಕ್ಷೆಯಿದ್ದು, ಅದಕ್ಕೂ ಮುನ್ನವೇ ಈ ಭೇಟಿ ನಡೆದಿರುವುದು ಗಮನ ಸೆಳೆದಿದೆ.

ನೂತನ ಸರ್ಕಾರದ ಪ್ರಮಾಣವಚನ ಸಮಾರಂಭ ಭಾನುವಾರ ಅಥವಾ ಸೋಮವಾರ ನಡೆಯುವ ಸಾಧ್ಯತೆ ಇದೆ ಎಂದು ಆರಂಭದಲ್ಲಿ ಹೇಳಲಾಗಿತ್ತಾದರೂ, ಇದೀಗ ಮುಂದಿನ ವಾರ, ಬಹುಶಃ ಬುಧವಾರ ಕಾರ್ಯಕ್ರಮ ನಡೆಯುವ ಸಾಧ್ಯತೆಗಳ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಆದರೆ ಅಧಿಕೃತ ದಿನಾಂಕ ಇನ್ನೂ ಪ್ರಕಟವಾಗಿಲ್ಲ.

ಇದೇ ವೇಳೆ ಮುಖ್ಯಮಂತ್ರಿ ಪ್ರಮಾಣವಚನ ಸಮಾರಂಭವನ್ನು ಲೋಕಭವನದಲ್ಲಿ ನಡೆಸಬೇಕೇ ಅಥವಾ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮುಂದೆ ಆಯೋಜಿಸಬೇಕೇ ಎಂಬ ಬಗ್ಗೆ ಚರ್ಚೆಗಳು ನಡೆಯುತ್ತಿವೆ ಎಂದು ಮೂಲಗಳು ತಿಳಿಸಿವೆ.

ಈ ಬೆಳವಣಿಗೆಗಳ ನಡುವೆ ವಿಧಾನಸೌಧದ ಸುತ್ತಮುತ್ತ ಪೂರ್ವಸಿದ್ಧತಾ ಕಾರ್ಯಗಳು ಆರಂಭವಾಗಿದ್ದು, ರಾಜ್ಯ ರಾಜಕೀಯದಲ್ಲಿ ಮುಂದಿನ ಬೆಳವಣಿಗೆಗಳ ಬಗ್ಗೆ ಕುತೂಹಲ ಮತ್ತಷ್ಟು ಹೆಚ್ಚಿದೆ.

ಪತ್ನಿ ಜೀವಂತವಾಗಿದ್ದರೂ ಪತಿಯ ವಿರುದ್ಧ ಆತ್ಮಹತ್ಯೆ ಪ್ರಚೋದನೆ ಪ್ರಕರಣ: ತನಿಖಾಧಿಕಾರಿ ವಿರುದ್ಧ ಹೈಕೋರ್ಟ್ ತನಿಖೆಗೆ ಆದೇಶ

ಬೆಂಗಳೂರು: ಪತಿಯ ಕಿರುಕುಳದಿಂದ ಬೇಸತ್ತು ಮಹಿಳೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿ ಬದುಕುಳಿದಿದ್ದರೂ, ಪತಿಯ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ದೋಷಾರೋಪ ಪಟ್ಟಿ ಸಲ್ಲಿಸಿದ್ದ ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಇಲಾಖಾ ತನಿಖೆ ನಡೆಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಪತ್ನಿಗೆ ಕಿರುಕುಳ ನೀಡಿದ ಹಾಗೂ ಜೀವ ಬೆದರಿಕೆ ಹಾಕಿದ ಆರೋಪದಡಿ ತಮ್ಮ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ರದ್ದುಪಡಿಸುವಂತೆ ಕೋರಿ ಆರ್.ಎಸ್. ಪಾಳ್ಯದ ನಿವಾಸಿ ನಿಕ್ಸೋನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಈ ಮಹತ್ವದ ಆದೇಶ ನೀಡಿದೆ.

ಪ್ರಕರಣದ ವಿವರಗಳ ಪ್ರಕಾರ, 2025ರ ಅಕ್ಟೋಬರ್ 20ರಂದು ಪತಿ-ಪತ್ನಿ ನಡುವೆ ಜಗಳ ನಡೆದಿತ್ತು. ಈ ವೇಳೆ ಮನನೊಂದು ಮಹಿಳೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿ ಮನೆಯ ಎರಡನೇ ಮಹಡಿಯಿಂದ ಕೆಳಗೆ ಜಿಗಿದಿದ್ದರು. ಪರಿಣಾಮವಾಗಿ ಅವರಿಗೆ ಬೆನ್ನುಮೂಳೆ ಹಾಗೂ ಕೈಗೆ ಗಂಭೀರ ಗಾಯಗಳಾಗಿದ್ದರೂ, ಬಳಿಕ ಚಿಕಿತ್ಸೆ ಪಡೆದು ಸಂಪೂರ್ಣ ಚೇತರಿಸಿಕೊಂಡಿದ್ದರು.

ಆದರೆ ಮಹಿಳೆ ಬದುಕಿದ್ದರೂ, ತನಿಖಾಧಿಕಾರಿಗಳು ಭಾರತೀಯ ನಾಗರಿಕ ಸಂಹಿತೆಯ ಸೆಕ್ಷನ್ 108ರ ಅಡಿಯಲ್ಲಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪವನ್ನು ದಾಖಲಿಸಿ ಪತಿಯ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಈ ಕ್ರಮವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ನ್ಯಾಯಪೀಠ, ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಜೀವಂತವಾಗಿದ್ದರೂ ಆತ್ಮಹತ್ಯೆಗೆ ಪ್ರಚೋದನೆ ಆರೋಪದಡಿ ದೋಷಾರೋಪ ಪಟ್ಟಿ ಸಲ್ಲಿಸಿರುವುದು ಕಾನೂನು ಅರಿವಿನ ಕೊರತೆ ಹಾಗೂ ತನಿಖೆಯಲ್ಲಿನ ಗಂಭೀರ ಲೋಪವನ್ನು ತೋರಿಸುತ್ತದೆ ಎಂದು ಅಭಿಪ್ರಾಯಪಟ್ಟಿದೆ.

ಅಜಾಗರೂಕತೆ ಅಥವಾ ಆತುರದ ನಿರ್ಧಾರದಿಂದ ಸಲ್ಲಿಸಲಾದ ಈ ದೋಷಾರೋಪ ಪಟ್ಟಿಯಿಂದ ಅರ್ಜಿದಾರ ಸುಮಾರು ಆರು ತಿಂಗಳು ಜೈಲಿನಲ್ಲಿ ಕಾಲ ಕಳೆಯುವಂತಾಗಿದೆ. ಇದು ವ್ಯಕ್ತಿಯ ವೈಯಕ್ತಿಕ ಸ್ವಾತಂತ್ರ್ಯದ ಮೇಲಿನ ನಿರ್ಲಕ್ಷ್ಯವನ್ನು ಪ್ರತಿಬಿಂಬಿಸುತ್ತದೆ ಎಂದು ನ್ಯಾಯಾಲಯ ಕಿಡಿಕಾರಿದೆ.

ತನಿಖಾಧಿಕಾರಿಯ ಕರ್ತವ್ಯಲೋಪ ಹಾಗೂ ನಿರ್ಲಕ್ಷ್ಯ ನ್ಯಾಯಾಂಗದ ಮನಃಸಾಕ್ಷಿಗೆ ಆಘಾತ ಉಂಟುಮಾಡಿದೆ ಎಂದು ಅಭಿಪ್ರಾಯಪಟ್ಟ ನ್ಯಾಯಪೀಠ, ಸಂಬಂಧಪಟ್ಟ ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಇಲಾಖಾ ವಿಚಾರಣೆ ನಡೆಸುವಂತೆ ಸರ್ಕಾರಕ್ಕೆ ಆದೇಶಿಸಿದೆ.

ಜೊತೆಗೆ, ವಿಚಾರಣೆಯ ಆಧಾರದ ಮೇಲೆ ಕೈಗೊಂಡ ಕ್ರಮದ ಕುರಿತು ಮೂರು ತಿಂಗಳೊಳಗೆ ನ್ಯಾಯಾಲಯಕ್ಕೆ ವರದಿ ಸಲ್ಲಿಸಬೇಕು ಎಂದು ಸೂಚಿಸಿದೆ.

ವಿಚಾರಣೆ ವೇಳೆ ಪತಿ ಮತ್ತು ಪತ್ನಿ ಇಬ್ಬರೂ ಭವಿಷ್ಯದಲ್ಲಿ ಜೊತೆಯಾಗಿ ಜೀವನ ನಡೆಸಲು ತೀರ್ಮಾನಿಸಿದ್ದು, ಪರಸ್ಪರ ರಾಜಿ ಸಂಧಾನದ ಮೂಲಕ ವಿವಾದ ಬಗೆಹರಿಸಿಕೊಂಡಿರುವುದಾಗಿ ನ್ಯಾಯಾಲಯಕ್ಕೆ ತಿಳಿಸಿದರು.

ಇದನ್ನು ಪರಿಗಣಿಸಿದ ಹೈಕೋರ್ಟ್, ನಿಕ್ಸೋನ್ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ರದ್ದುಪಡಿಸಿ ಆದೇಶ ಹೊರಡಿಸಿದೆ. ಜೊತೆಗೆ ಅರ್ಜಿದಾರರನ್ನು ಜೈಲಿನಿಂದ ಬಿಡುಗಡೆ ಮಾಡುವಂತೆಯೂ ನಿರ್ದೇಶನ ನೀಡಿದೆ.

ಭಾರತ–ಅಮೆರಿಕ ವ್ಯಾಪಾರ ಒಪ್ಪಂದ 99% ಪೂರ್ಣ; ಶೀಘ್ರದಲ್ಲೇ ಅಂತಿಮ ಒಪ್ಪಂದಕ್ಕೆ ಸಹಿ ಸಾಧ್ಯತೆ

ನವದೆಹಲಿ/ವಾಷಿಂಗ್ಟನ್: ಭಾರತ ಮತ್ತು ಅಮೆರಿಕ ನಡುವಿನ ಮಹತ್ವದ ವ್ಯಾಪಾರ ಒಪ್ಪಂದಕ್ಕೆ ಸಂಬಂಧಿಸಿದ ಮಾತುಕತೆಗಳು ಅಂತಿಮ ಹಂತ ತಲುಪಿದ್ದು, ಶೇಕಡಾ 99ರಷ್ಟು ಚರ್ಚೆಗಳು ಪೂರ್ಣಗೊಂಡಿವೆ ಎಂದು ಅಮೆರಿಕದ ರಾಯಭಾರಿ ಸೆರ್ಗಿಯೊ ಗೋರ್ ತಿಳಿಸಿದ್ದಾರೆ.

ದೆಹಲಿ ಐಐಟಿಯಲ್ಲಿ ನಡೆದ ‘ಯುಎಸ್-ಇಂಡಿಯಾ ಟ್ರಸ್ಟ್ ಇನಿಶಿಯೇಟಿವ್: ಅಡ್ವಾನ್ಸಿಂಗ್ ಪಾರ್ಟ್ನರ್‌ಶಿಪ್ ಇನ್ ರಿಸರ್ಚ್ ಅಂಡ್ ಇನ್ನೋವೇಶನ್’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಉಭಯ ರಾಷ್ಟ್ರಗಳ ನಡುವಿನ ಒಪ್ಪಂದದ ಬಹುತೇಕ ಅಂಶಗಳ ಕುರಿತು ಒಮ್ಮತ ಮೂಡಿದ್ದು, ಕೇವಲ 1 ಶೇಕಡಾ ಮಾತುಕತೆ ಮಾತ್ರ ಬಾಕಿಯಿದೆ ಎಂದು ಹೇಳಿದರು.

“ಭಾರತ ಮತ್ತು ಅಮೆರಿಕ ಶೀಘ್ರದಲ್ಲೇ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕುವ ವಿಶ್ವಾಸವಿದೆ. ಅಂತಿಮ ಹಂತದ ವಿವರಗಳನ್ನು ಚರ್ಚಿಸಲು ಭಾರತೀಯ ಸಮಾಲೋಚಕರು ಇತ್ತೀಚೆಗೆ ವಾಷಿಂಗ್ಟನ್‌ಗೆ ಭೇಟಿ ನೀಡಿದ್ದರು. ಇದೇ ವೇಳೆ ಅಮೆರಿಕದ ಮುಖ್ಯ ವ್ಯಾಪಾರ ಸಮಾಲೋಚಕರನ್ನೊಳಗೊಂಡ ನಿಯೋಗವು ಜೂನ್ 1ರಿಂದ 4ರವರೆಗೆ ಭಾರತಕ್ಕೆ ಭೇಟಿ ನೀಡಿ ಮಾತುಕತೆ ಮುಂದುವರಿಸಲಿದೆ” ಎಂದು ತಿಳಿಸಿದರು.

ಮುಂಬರುವ ಸುತ್ತಿನ ಚರ್ಚೆಗಳಲ್ಲಿ ಇನ್ನಷ್ಟು ಪ್ರಗತಿ ಸಾಧಿಸುವ ನಿರೀಕ್ಷೆ ಇದೆ ಎಂದು ಹೇಳಿದ ಅವರು, ಇದು ಕಳೆದ ಏಪ್ರಿಲ್‌ನಲ್ಲಿ ವಾಷಿಂಗ್ಟನ್‌ನಲ್ಲಿ ನಡೆದ ಭಾರತ-ಅಮೆರಿಕ ಅಧಿಕಾರಿಗಳ ಮಾತುಕತೆಯ ಮುಂದುವರಿದ ಭಾಗವಾಗಿದೆ ಎಂದರು.

ಭಾರತ ಮತ್ತು ಅಮೆರಿಕ ನಡುವಿನ ಆರ್ಥಿಕ ಸಂಬಂಧಗಳ ಬೆಳವಣಿಗೆಯನ್ನು ಉಲ್ಲೇಖಿಸಿದ ಸೆರ್ಗಿಯೊ ಗೋರ್, ಕಳೆದ ಎರಡು ದಶಕಗಳಲ್ಲಿ ಉಭಯ ದೇಶಗಳ ನಡುವಿನ ಸರಕು ಮತ್ತು ಸೇವೆಗಳ ದ್ವಿಪಕ್ಷೀಯ ವ್ಯಾಪಾರವು ಸುಮಾರು 20 ಬಿಲಿಯನ್ ಡಾಲರ್‌ನಿಂದ 220 ಬಿಲಿಯನ್ ಡಾಲರ್‌ಗಿಂತಲೂ ಹೆಚ್ಚಾಗಿದೆ ಎಂದು ಹೇಳಿದರು.

ಈ ಬೆಳವಣಿಗೆ ಕೇವಲ ಆರ್ಥಿಕ ಸಹಕಾರವನ್ನಷ್ಟೇ ಅಲ್ಲ, ಎರಡು ರಾಷ್ಟ್ರಗಳ ನಡುವಿನ ಬಲಿಷ್ಠ ಪಾಲುದಾರಿಕೆಯನ್ನು ಪ್ರತಿಬಿಂಬಿಸುತ್ತದೆ ಎಂದು ಅವರು ಶ್ಲಾಘಿಸಿದರು.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತವು ಅಮೆರಿಕದ ಉದ್ಯಮಗಳು ಮತ್ತು ಕಾರ್ಮಿಕರಿಗೆ ಹೆಚ್ಚಿನ ಅವಕಾಶಗಳನ್ನು ಸೃಷ್ಟಿಸುವ ಉದ್ದೇಶದಿಂದ ವ್ಯಾಪಾರ ವಿಸ್ತರಣೆಗೆ ಆದ್ಯತೆ ನೀಡುತ್ತಿದೆ. ಈ ನಿಟ್ಟಿನಲ್ಲಿ ಭಾರತವನ್ನು ಅಮೆರಿಕದ ಪ್ರಮುಖ ವ್ಯಾಪಾರ ಪಾಲುದಾರ ರಾಷ್ಟ್ರಗಳಲ್ಲಿ ಒಂದಾಗಿ ಪರಿಗಣಿಸಲಾಗಿದೆ ಎಂದು ಸೆರ್ಗಿಯೊ ಗೋರ್ ಹೇಳಿದರು.

ರಾಮನಗರದಲ್ಲಿ ಡಿಕೆಶಿ ಸಂಭ್ರಮ ಶುರು! 25 ಅಡಿ ಕಟೌಟ್‌, ‘ನೂತನ ಸಿಎಂ’ ಬ್ಯಾನರ್‌ಗಳಿಂದ ಕಂಗೊಳಿಸಿದ ನಗರ

ರಾಮನಗರ: ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ಮುಹೂರ್ತ ನಿಗದಿಯಾಗಿರುವ ಬೆನ್ನಲ್ಲೇ ರಾಮನಗರ ಜಿಲ್ಲೆಯಲ್ಲಿ ಡಿ.ಕೆ. ಶಿವಕುಮಾರ್ ಪರ ಭರ್ಜರಿ ಸಂಭ್ರಮ ಆರಂಭವಾಗಿದೆ. ಕಾಂಗ್ರೆಸ್ ಕಾರ್ಯಕರ್ತರು ನಗರದ ಪ್ರಮುಖ ವೃತ್ತಗಳಲ್ಲಿ ಬೃಹತ್ ಕಟೌಟ್‌ಗಳು ಹಾಗೂ ಅಭಿನಂದನಾ ಬ್ಯಾನರ್‌ಗಳನ್ನು ಅಳವಡಿಸಿ ಸಂಭ್ರಮ ವ್ಯಕ್ತಪಡಿಸಿದ್ದಾರೆ.

ಐಜೂರು ವೃತ್ತದಲ್ಲಿ 25 ಅಡಿ ಎತ್ತರದ ಕಟೌಟ್ ಸ್ಥಾಪಿಸಲಾಗಿದ್ದು, ಡಿ.ಕೆ. ಶಿವಕುಮಾರ್ ಅವರ ನಾಯಕತ್ವವನ್ನು ಕೊಂಡಾಡುವ ಸಂದೇಶಗಳನ್ನು ಪ್ರದರ್ಶಿಸಲಾಗಿದೆ. ಪಕ್ಷದ ನಿಷ್ಠೆಗೆ ದೊರೆತ ಗೌರವ ಎಂದು ಉಲ್ಲೇಖಿಸಿ ಕಾರ್ಯಕರ್ತರು ಶುಭಾಶಯ ಕೋರಿದ್ದಾರೆ.

ಇದಕ್ಕೆ ವಿರುದ್ಧವಾಗಿ, ಕನಕಪುರದಲ್ಲಿ ಅಧಿಕೃತ ಘೋಷಣೆ ಹೊರಬೀಳುವವರೆಗೂ ಯಾವುದೇ ಬ್ಯಾನರ್ ಅಥವಾ ಬಂಟಿಂಗ್ಸ್ ಅಳವಡಿಸದಂತೆ ಡಿ.ಕೆ. ಬ್ರದರ್ಸ್ ಕಾರ್ಯಕರ್ತರಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಹೀಗಾಗಿ ರಾಮನಗರದಲ್ಲಿ ಸಂಭ್ರಮದ ವಾತಾವರಣ ಕಂಡುಬಂದರೆ, ಕನಕಪುರದಲ್ಲಿ ಕಾರ್ಯಕರ್ತರು ಅಧಿಕೃತ ಘೋಷಣೆಯ ನಿರೀಕ್ಷೆಯಲ್ಲಿದ್ದಾರೆ.

error: Content is protected !!