ಬೆಂಗಳೂರು: ದಾವಣಗೆರೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ಮುನ್ನಡೆ ಕಡಿಮೆಯಿದೆ ಎಂಬ ಕಾರಣಕ್ಕೆ ತಕ್ಷಣವೇ ಯಾವುದೇ ನಿರ್ಧಾರಕ್ಕೆ ಬರುವುದು ಸರಿಯಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ. ಅಭ್ಯರ್ಥಿ ಸಮರ್ಥ್ ಪ್ರಸ್ತುತ ಮುನ್ನಡೆಯಲ್ಲಿದ್ದು, ಅಂತಿಮ ಫಲಿತಾಂಶ ಹೊರಬರುವವರೆಗೂ ಕಾದು ನೋಡುವುದು ಸೂಕ್ತ ಎಂದು ಅವರು ಅಭಿಪ್ರಾಯಪಟ್ಟರು.
ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ದಾವಣಗೆರೆ ಹಾಗೂ ಬಾಗಲಕೋಟೆ ಉಪಚುನಾವಣೆ ಫಲಿತಾಂಶಗಳ ಕುರಿತು ಪ್ರತಿಕ್ರಿಯಿಸಿ, ನಮಗೆ ಲಭ್ಯವಾಗಿರುವ ಮಾಹಿತಿ ಪ್ರಕಾರ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸುವ ವಿಶ್ವಾಸವಿದೆ ಎಂದು ಹೇಳಿದರು.
ರಾಜ್ಯ ಸರ್ಕಾರ ಜಾರಿಗೆ ತಂದಿರುವ ಜನಪರ ಕಾರ್ಯಕ್ರಮಗಳು ಕಾಂಗ್ರೆಸ್ ಅಭ್ಯರ್ಥಿಗಳಿಗೆ ನೆರವಾಗಲಿದ್ದು, ಅಂತಿಮ ಹಂತದವರೆಗೆ ಫಲಿತಾಂಶದ ಬಗ್ಗೆ ತಾಳ್ಮೆಯಿಂದ ಕಾಯಬೇಕು ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಪಶ್ಚಿಮ ಬಂಗಾಳ ಚುನಾವಣಾ ಫಲಿತಾಂಶದ ಕುರಿತು ಮಾತನಾಡಿದ ಸಚಿವರು, ಅಲ್ಲಿ ಬಿಜೆಪಿ ಕಾರ್ಯಕರ್ತರ ನಡೆ ಕುರಿತು ಈಗಾಗಲೇ ಹಲವು ಪ್ರಶ್ನೆಗಳು ಉದ್ಭವಿಸಿವೆ ಎಂದರು. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು 96 ಲಕ್ಷಕ್ಕೂ ಅಧಿಕ ಮತಗಳನ್ನು ಅಳಿಸಲಾಗಿದೆ ಎಂದು ಮಾಡಿರುವ ಆರೋಪ ಗಂಭೀರ ಸ್ವರೂಪದ್ದಾಗಿದೆ. ಈ ಆರೋಪ ಸತ್ಯವಾಗಿದ್ದರೆ ಅಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಚುನಾವಣಾ ಪ್ರಕ್ರಿಯೆ ಎಷ್ಟರ ಮಟ್ಟಿಗೆ ಸಮರ್ಪಕವಾಗಿ ಪಾಲನೆಯಾಗಿದೆ ಎಂಬುದನ್ನು ಪರಿಶೀಲಿಸಬೇಕಾಗಿದೆ ಎಂದು ಹೇಳಿದರು.

